Home Blog

ರೈತರ ಹಿತವೇ ಸರ್ಕಾರದ ಮೊದಲ ಆದ್ಯತೆ: ಶಾಸಕ ಕೆ. ನೇಮಿರಾಜ ನಾಯ್ಕ

ವಿಜಯಸಾಕ್ಷಿ ಸುದ್ದಿ, ಹಗರಿಬೊಮ್ಮನಹಳ್ಳಿ: ಪಟ್ಟಣದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (ಎಪಿಎಂಸಿ) ಆವರಣದಲ್ಲಿ ಕೃಷಿ ಇಲಾಖೆ ವತಿಯಿಂದ ಆಯೋಜಿಸಿದ್ದ 2026-27ನೇ ಸಾಲಿನ ಮುಂಗಾರು ಹಂಗಾಮಿನ ರೈತರಿಗೆ ರಿಯಾಯಿತಿ ದರದಲ್ಲಿ ಬಿತ್ತನೆ ಬೀಜ ಹಾಗೂ ರಸಗೊಬ್ಬರ ವಿತರಣಾ ಕಾರ್ಯಕ್ರಮಕ್ಕೆ ಶಾಸಕ ಕೆ. ನೇಮಿರಾಜ ನಾಯ್ಕ ಚಾಲನೆ ನೀಡಿದರು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ರೈತರ ಹಿತಾಸಕ್ತಿ ಕಾಪಾಡುವುದು ಸರ್ಕಾರದ ಮೊದಲ ಆದ್ಯತೆಯಾಗಿದ್ದು, ಕೃಷಿಯಲ್ಲಿ ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆ ಮಣ್ಣಿನ ಫಲವತ್ತತೆಯನ್ನು ಹಾಳುಮಾಡುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು. ರೈತರು ಕೊಟ್ಟಿಗೆ ಗೊಬ್ಬರ ಸೇರಿದಂತೆ ಸಾವಯವ ಪದ್ಧತಿಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಸಲಹೆ ನೀಡಿದರು.
ಇಂದಿನ ಜಾಗತಿಕ ಯುದ್ಧ ಪರಿಸ್ಥಿತಿಯಲ್ಲಿ ರಾಸಾಯನಿಕ ಗೊಬ್ಬರಗಳ ಲಭ್ಯತೆ ವ್ಯತ್ಯಯವಾಗುವ ಸಾಧ್ಯತೆ ಇದೆ. ಇಂತಹ ಸಂದರ್ಭದಲ್ಲಿ ರೈತರು ನ್ಯಾನೋ ಯೂರಿಯಾ ಹಾಗೂ ಲಿಕ್ವಿಡ್ ಡಿಎಪಿ ಸಿಂಪಡಣೆ ಮೂಲಕ ಬೆಳೆಗಳನ್ನು ರಕ್ಷಿಸಿಕೊಳ್ಳಬೇಕು ಎಂದು ತಿಳಿಸಿದರು.
ತಾಲೂಕಿನ ಹಂಪಸಾಗರ, ತಂಬ್ರಹಳ್ಳಿ, ಕೋಗಳಿ, ಹಗರಿಬೊಮ್ಮನಹಳ್ಳಿ ಹಾಗೂ ಎಪಿಎಂಸಿ ಆವರಣದಲ್ಲಿ ಒಟ್ಟು ಐದು ಬಿತ್ತನೆ ಬೀಜ ವಿತರಣಾ ಕೇಂದ್ರಗಳನ್ನು ತೆರೆಯಲಾಗಿದ್ದು, ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.
ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಎಸ್.ಬಿ. ಪಾಟೀಲ್ ಮಾತನಾಡಿ, ರೈತರಿಗೆ ಅಗತ್ಯವಿರುವ 270 ಕ್ವಿಂಟಲ್ ಬಿತ್ತನೆ ಬೀಜ ಸಂಗ್ರಹವಿದ್ದು, ಪಹಣಿ ಹಾಗೂ ಆಧಾರ್ ಕಾರ್ಡ್ ಜೆರಾಕ್ಸ್ ಪ್ರತಿಯನ್ನು ನೀಡಿ ಬೀಜ ಖರೀದಿಸಬಹುದು ಎಂದು ತಿಳಿಸಿದರು. 2, 3, 4 ಮತ್ತು 5 ಕೆಜಿ ಪ್ಯಾಕೆಟ್‌ಗಳಲ್ಲಿ ಬಿತ್ತನೆ ಬೀಜ ಲಭ್ಯವಿದ್ದು, ಎಫ್‌ಐಡಿ ನಿಯಮಾನುಸಾರ ಎಸ್‌ಸಿ ಮತ್ತು ಎಸ್‌ಟಿ ವರ್ಗದ ರೈತರಿಗೆ ರೂ.30 ಹಾಗೂ ಸಾಮಾನ್ಯ ವರ್ಗದ ರೈತರಿಗೆ ರೂ.20 ಸಬ್ಸಿಡಿ ನೀಡಲಾಗುವುದು ಎಂದರು. ರೈತರಿಗೆ ಯಾವುದೇ ರೀತಿಯ ಬಿತ್ತನೆ ಬೀಜ ಕೊರತೆ ಉಂಟಾಗದಂತೆ ಸಾಕಷ್ಟು ಪ್ರಮಾಣದಲ್ಲಿ ಬೀಜ ವಿತರಣೆ ಮಾಡಲಾಗುವುದು ಎಂದು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಕೃಷಿಕ ಸಮಾಜದ ಅಧ್ಯಕ್ಷ ಹನಸಿ ದೇವರಾಜ್, ಜೆಡಿಎಸ್ ತಾಲೂಕು ಅಧ್ಯಕ್ಷ ವೈ. ಮಲ್ಲಿಕಾರ್ಜುನ್, ಸಿನಿಮಾ ಮಂಜಣ್ಣ, ಜಿಲ್ಲಾ ಉಪಾಧ್ಯಕ್ಷ ಕೃಷ್ಣಮೂರ್ತಿ ಶೆಟ್ರು, ಕಾರ್ಯದರ್ಶಿ ಪಾಂಡುರಂಗ ನಾಯ್ಕ, ಮುಖಂಡರಾದ ಕೋಗಳಿ ಹನುಮಂತಪ್ಪ, ವಿಶ್ವಕರ್ಮ ಸಮಾಜದ ಅಧ್ಯಕ್ಷ ಸಿದ್ದರಾಜು, ಕೃಷಿ ಇಲಾಖೆಯ ಅಧಿಕಾರಿಗಳಾದ ಭೋಜ ನಾಯ್ಕ, ನಾಗಾರ್ಜುನ, ಶಶಿಕುಮಾರ್, ಶಿವಮೂರ್ತಿ ಸೇರಿದಂತೆ ರೈತರು ಹಾಗೂ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
“ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಮಣ್ಣಿನ ಫಲವತ್ತತೆ ಕುಂಠಿತವಾಗುತ್ತಿದೆ. ರೈತರು ಸಾವಯವ ಕೃಷಿಗೆ ಹೆಚ್ಚಿನ ಆದ್ಯತೆ ನೀಡಬೇಕು.”
ಕೆ. ನೇಮಿರಾಜ ನಾಯ್ಕ, ಶಾಸಕ

ಬಕ್ರೀದ್ ವೇಳೆ ಗೋಹತ್ಯೆ ತಡೆಗೆ ಆಗ್ರಹ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಪಟ್ಟಣದ ಐತಿಹಾಸಿಕ ಪ್ರಸಿದ್ಧ ಶ್ರೀ ಸೋಮೇಶ್ವರ ದೇವಸ್ಥಾನದ ಸಮೀಪದಲ್ಲಿರುವ ಮಾಂಸ ಮಾರಾಟದ ಅಂಗಡಿಗಳನ್ನು ಸ್ಥಳಾಂತರಿಸಬೇಕು ಹಾಗೂ ಬಕ್ರೀದ್ ವೇಳೆ ಗೋಹತ್ಯೆ ನಡೆಯದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಶ್ರೀರಾಮ ಸೇನಾ ಹಾಗೂ ಹಿಂದೂ ರಾಷ್ಟ್ರ ಸಮನ್ವಯ ಸಮಿತಿ ವತಿಯಿಂದ ತಹಸೀಲ್ದಾರರಿಗೆ ಮನವಿ ಸಲ್ಲಿಸಲಾಯಿತು.

ಬುಧವಾರ ತಹಸೀಲ್ದಾರ ಕಚೇರಿಯಲ್ಲಿ ಗ್ರೇಡ್-2 ತಹಸೀಲ್ದಾರ ಮಂಜುನಾಥ ಅಮಾಸಿ ಅವರಿಗೆ ಮನವಿ ಸಲ್ಲಿಸಿದ ಬಳಿಕ ಮಾತನಾಡಿದ ಶ್ರೀರಾಮ ಸೇನಾ ತಾಲೂಕು ಅಧ್ಯಕ್ಷ ಈರಣ್ಣ ಪೂಜಾರ ಹಾಗೂ ಹಿಂದೂ ಯುವ ಮುಖಂಡ ಗಂಗಾಧರ ಮೆಣಸಿನಕಾಯಿ, ಐತಿಹಾಸಿಕ ಶ್ರೀ ಸೋಮೇಶ್ವರ ದೇವಸ್ಥಾನ ಪವಿತ್ರ ಧಾರ್ಮಿಕ ಕ್ಷೇತ್ರವಾಗಿದ್ದು ಪ್ರತಿದಿನ ಸಾವಿರಾರು ಭಕ್ತರು ಆಗಮಿಸುತ್ತಾರೆ. ದೇವಸ್ಥಾನದ ಕೂಗಳತೆಯಲ್ಲೇ ಮೀನು, ಮಟನ್ ಹಾಗೂ ಚಿಕನ್ ಮಾರಾಟ ನಡೆಯುತ್ತಿರುವುದು ಭಕ್ತರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟುಮಾಡುತ್ತಿದೆ ಎಂದು ಆರೋಪಿಸಿದರು.

ಕೂಡಲೇ ಮಾಂಸ ಮಾರಾಟದ ಅಂಗಡಿಗಳನ್ನು 15 ದಿನಗಳೊಳಗೆ ಪಟ್ಟಣದ ಹೊರಭಾಗಕ್ಕೆ ಸ್ಥಳಾಂತರಿಸಬೇಕು. ಅಕ್ರಮ ಕಸಾಯಿಖಾನೆಗಳಿಗೆ ಅಧಿಕಾರಿಗಳು ಭೇಟಿ ನೀಡಿ ನೋಟಿಸ್ ಜಾರಿ ಮಾಡಿ ತೆರವುಗೊಳಿಸಬೇಕು. ಬಕ್ರೀದ್ ವೇಳೆ ಗೋಹತ್ಯೆ ಹಾಗೂ ಅಕ್ರಮ ಮಾಂಸ ಮಾರಾಟ ನಡೆಯದಂತೆ ಪೊಲೀಸ್ ಇಲಾಖೆ ಹಾಗೂ ಪುರಸಭೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಇದೇ ವೇಳೆ ಶಾಲೆ ಹಾಗೂ ಕಾಲೇಜುಗಳಲ್ಲಿ ಹಿಜಾಬ್‌ಗೆ ಅವಕಾಶ ನೀಡಿ ಕೇಸರಿ ಶಾಲು ನಿರ್ಬಂಧಿಸುವ ಸರ್ಕಾರದ ನಿರ್ಧಾರವನ್ನು ಹಿಂಪಡೆಯಬೇಕು. ಇಲ್ಲವಾದರೆ ಹಿಂದೂ ಸಂಘಟನೆಗಳಿಂದ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.

ಈ ಸಂದರ್ಭದಲ್ಲಿ ದುಂಡೇಶ ಕೋಟಗಿ, ವಿಜಯ ಕುಂಬಾರ, ಶಕ್ತಿ ಕತ್ತಿ, ವಿಶಾಲ ಬಟಗುರ್ಕಿ, ನವೀನ ಹಿರೇಮಠ, ಮಹಾಂತೇಶ ರಗಟಿ, ಅಮಿತ ಗುಡಗೇರಿ ಸೇರಿದಂತೆ ನೂರಾರು ಕಾರ್ಯಕರ್ತರು ಉಪಸ್ಥಿತರಿದ್ದರು.

ಮತದಾರರ ಪಟ್ಟಿ ಪರಿಷ್ಕರಣೆಗೆ ಚುರುಕು

ವಿಜಯಸಾಕ್ಷಿ ಸುದ್ದಿ, ಗದಗ: ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ-2026ರ ಹಿನ್ನೆಲೆಯಲ್ಲಿ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಅವರ ಅಧ್ಯಕ್ಷತೆಯಲ್ಲಿ ರಾಜಕೀಯ ಪಕ್ಷಗಳ ಮುಖಂಡರೊಂದಿಗೆ ಮಹತ್ವದ ಸಭೆ ನಡೆಯಿತು.
ಭಾರತ ಚುನಾವಣಾ ಆಯೋಗವು 14-05-2026ರಂದು ಹೊರಡಿಸಿದ ಮಾರ್ಗಸೂಚಿಗಳ ಅನ್ವಯ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯ ಕೈಗೊಳ್ಳಲಾಗುತ್ತಿದ್ದು, ಅದರ ಪೂರ್ವ ತಯಾರಿ ಹಾಗೂ ಸಮಗ್ರ ಮಾಹಿತಿಯನ್ನು ರಾಜಕೀಯ ಪಕ್ಷಗಳಿಗೆ ನೀಡುವ ಉದ್ದೇಶದಿಂದ ಸಭೆ ಆಯೋಜಿಸಲಾಗಿತ್ತು ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಜಿಲ್ಲಾ ಚುನಾವಣಾಧಿಕಾರಿಗಳು, ಅಪರ ಜಿಲ್ಲಾ ಚುನಾವಣಾಧಿಕಾರಿಗಳು, ಚುನಾವಣಾ ತಹಶೀಲ್ದಾರರು, ಮತದಾರ ನೋಂದಣಾಧಿಕಾರಿಗಳು ಹಾಗೂ ಸಹಾಯಕ ಮತದಾರ ನೋಂದಣಾಧಿಕಾರಿಗಳ ವಿವರಗಳನ್ನು ಸಭೆಯಲ್ಲಿ ಹಂಚಿಕೊಳ್ಳಲಾಯಿತು.
ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟು 967 ಮತಗಟ್ಟೆಗಳಿದ್ದು, 4,48,794 ಪುರುಷ ಮತದಾರರು, 4,56,352 ಮಹಿಳಾ ಮತದಾರರು ಹಾಗೂ 60 ತೃತೀಯಲಿಂಗಿ ಮತದಾರರು ಸೇರಿ ಒಟ್ಟು 9,05,206 ಮತದಾರರಿದ್ದಾರೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದರು.
ಪ್ರತಿ ಮತಗಟ್ಟೆಗೆ ಒಬ್ಬರಂತೆ 967 ಬಿ.ಎಲ್.ಓಗಳು ಹಾಗೂ ಪ್ರತಿ 10 ಬಿ.ಎಲ್.ಓಗಳಿಗೆ ಒಬ್ಬರಂತೆ 97 ಬಿ.ಎಲ್.ಓ ಮೇಲ್ವಿಚಾರಕರು ಕಾರ್ಯನಿರ್ವಹಿಸುತ್ತಿದ್ದಾರೆ. 2002ರ ಮತದಾರರ ಪಟ್ಟಿಗೆ 2025ರ ಮತದಾರರನ್ನು ಮ್ಯಾಪಿಂಗ್ ಮಾಡುವ ಕಾರ್ಯದಲ್ಲಿ ಈಗಾಗಲೇ 8,26,953 ಮತದಾರರನ್ನು ಮ್ಯಾಪಿಂಗ್ ಮಾಡಲಾಗಿದ್ದು, ಶೇ.91.36ರಷ್ಟು ಪ್ರಗತಿ ಸಾಧಿಸಲಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲೆಯ ಎಲ್ಲ 967 ಮತಗಟ್ಟೆಗಳಿಗೆ ಬೂತ್ ಲೆವೆಲ್ ಏಜೆಂಟ್‌ಗಳ (BLA) ನೇಮಕ ಮಾಡಿ ಪಟ್ಟಿ ಸಲ್ಲಿಸುವಂತೆ ರಾಜಕೀಯ ಪಕ್ಷಗಳಿಗೆ ಸೂಚಿಸಲಾಯಿತು. ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯವನ್ನು ಯಶಸ್ವಿಯಾಗಿ ಪೂರ್ಣಗೊಳಿಸಲು ಬಿ.ಎಲ್.ಓಗಳು, ಸಹಾಯಕ ಮತದಾರ ನೋಂದಣಾಧಿಕಾರಿಗಳು ಹಾಗೂ ಮತದಾರ ನೋಂದಣಾಧಿಕಾರಿಗಳೊಂದಿಗೆ ರಾಜಕೀಯ ಪಕ್ಷಗಳು ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಮನವಿ ಮಾಡಿದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್, ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್., ಚುನಾವಣಾ ತಹಶೀಲ್ದಾರರು, ಸಹಾಯಕ ಮತದಾರ ನೋಂದಣಾಧಿಕಾರಿಗಳು ಹಾಗೂ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.

ಇಂಧನ ದರ ಏರಿಕೆ, ವಿದ್ಯಾರ್ಥಿಗಳ ಸಂಕಷ್ಟಕ್ಕೆ ಮೋದಿ ಸರ್ಕಾರವೇ ಕಾರಣ: ಹುಡೇದ್ ಗುರು ಬಸವರಾಜ್

ವಿಜಯಸಾಕ್ಷಿ ಸುದ್ದಿ, ಹಗರಿಬೊಮ್ಮನಹಳ್ಳಿ: ಪೆಟ್ರೋಲ್-ಡೀಸೆಲ್ ದರ ಏರಿಕೆ, ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಜನಸಾಮಾನ್ಯರ ಸಂಕಷ್ಟದ ವಿಚಾರವಾಗಿ ವಿಜಯನಗರ ಜಿಲ್ಲಾ ಕಾಂಗ್ರೆಸ್ ವಕ್ತಾರ ಹುಡೇದ್ ಗುರು ಬಸವರಾಜ್ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
ವರದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರದ ಮೋದಿ ನೇತೃತ್ವದ ಸರ್ಕಾರ ಕಳೆದ ಕೆಲ ದಿನಗಳಲ್ಲಿ ನಾಲ್ಕು ಬಾರಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚಿಸಿ ಜನರ ಮೇಲಿನ ಆರ್ಥಿಕ ಹೊರೆ ಮತ್ತಷ್ಟು ಹೆಚ್ಚಿಸಿದೆ ಎಂದು ಆರೋಪಿಸಿದರು.
“ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನರು ಸಂಕಷ್ಟದಲ್ಲಿದ್ದಾರೆ. ಇಂಧನ ದರ ಏರಿಕೆ ಬಡ ಹಾಗೂ ಮಧ್ಯಮ ವರ್ಗದ ಕುಟುಂಬಗಳ ಬದುಕಿಗೆ ದೊಡ್ಡ ಹೊಡೆತವಾಗಿದೆ,” ಎಂದು ಹೇಳಿದರು.
ದೇಶದ ವಿದ್ಯಾರ್ಥಿಗಳ ಭವಿಷ್ಯಕ್ಕೆ ಮಹತ್ವದ ನೀಟ್ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ದೇಶದ ಶಿಕ್ಷಣ ವ್ಯವಸ್ಥೆಯ ಮೇಲಿನ ನಂಬಿಕೆಯನ್ನು ಕುಗ್ಗಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ಪ್ರಕರಣದಿಂದ ಲಕ್ಷಾಂತರ ವಿದ್ಯಾರ್ಥಿಗಳು ಮಾನಸಿಕ ಒತ್ತಡಕ್ಕೆ ಒಳಗಾಗಿದ್ದು, ಕೆಲ ಯುವಕರು ಆತ್ಮಹತ್ಯೆ ಮಾಡಿಕೊಂಡ ಘಟನೆಗಳು ದೇಶದ ಮನಸ್ಸನ್ನು ನೋಯಿಸುವಂತಿವೆ ಎಂದು ಬೇಸರ ವ್ಯಕ್ತಪಡಿಸಿದರು.
ಒಂದೆಡೆ ದೇಶದಲ್ಲಿ ನಿರುದ್ಯೋಗ, ಬೆಲೆ ಏರಿಕೆ ಹಾಗೂ ಶಿಕ್ಷಣ ವ್ಯವಸ್ಥೆಯ ಅವ್ಯವಸ್ಥೆಯಿಂದ ಜನರು ಸಂಕಷ್ಟ ಅನುಭವಿಸುತ್ತಿದ್ದರೆ, ಮತ್ತೊಂದೆಡೆ ಪ್ರಧಾನಿ ನರೇಂದ್ರ ಮೋದಿ ವಿದೇಶ ಪ್ರವಾಸಗಳಲ್ಲಿ ತೊಡಗಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ ಎಂದು ಟೀಕಿಸಿದರು.
“ದೇಶಕ್ಕಾಗಿ ತ್ಯಾಗ ಮಾಡಬೇಕು ಎಂದು ಜನರಿಗೆ ಕರೆ ನೀಡುವ ಸರ್ಕಾರ ಮೊದಲು ಜನರ ನೋವು ಮತ್ತು ಸಮಸ್ಯೆಗಳನ್ನು ಅರ್ಥಮಾಡಿಕೊಳ್ಳಬೇಕು,” ಎಂದು ಹೇಳಿದರು.
ಪೆಟ್ರೋಲ್, ಡೀಸೆಲ್ ಹಾಗೂ ದಿನನಿತ್ಯ ಬಳಕೆಯ ವಸ್ತುಗಳ ಬೆಲೆ ಏರಿಕೆಯಿಂದ ರೈತರು, ಕಾರ್ಮಿಕರು, ವಿದ್ಯಾರ್ಥಿಗಳು ಹಾಗೂ ಸಣ್ಣ ವ್ಯಾಪಾರಿಗಳು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಆರೋಪಿಸಿದರು.
ಕೇಂದ್ರ ಸರ್ಕಾರ ತಕ್ಷಣ ಇಂಧನ ದರ ಏರಿಕೆಯನ್ನು ಹಿಂಪಡೆದು, ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಕುರಿತು ಪಾರದರ್ಶಕ ತನಿಖೆ ನಡೆಸಬೇಕು. ಜೊತೆಗೆ ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡಬೇಕು ಎಂದು ಆಗ್ರಹಿಸಿದರು.
“ಬೆಲೆ ಏರಿಕೆ ಮತ್ತು ಶಿಕ್ಷಣ ಹಗರಣಗಳಿಂದ ಜನರು ಕಂಗೆಟ್ಟಿದ್ದಾರೆ; ಕೇಂದ್ರ ಸರ್ಕಾರ ಜನರ ಧ್ವನಿಗೆ ಸ್ಪಂದಿಸಬೇಕು.”
ಹುಡೇದ್ ಗುರು ಬಸವರಾಜ್

ಪ್ರತಿ ಮನುಷ್ಯನಲ್ಲಿ ಗಾಂಧೀಜಿ–ಅಂಬೇಡ್ಕರ್ ಪ್ರಜ್ಞೆ ಅಗತ್ಯ: ಎ.ಎಸ್. ಮಕಾನದಾರ

ವಿಜಯಸಾಕ್ಷಿ ಸುದ್ದಿ, ಗದಗ: ಜಾಗತೀಕರಣದ ಕರಿನೆರಳಿನ ಇಂದಿನ ದಿನಮಾನದಲ್ಲಿ ಪ್ರತಿಯೊಬ್ಬ ಮನುಷ್ಯನಲ್ಲೂ ಗಾಂಧೀಜಿ ಪ್ರಜ್ಞೆ ಮತ್ತು ಅಂಬೇಡ್ಕರ್ ಪ್ರಜ್ಞೆ ಮೈಗೂಡಿಸಿಕೊಳ್ಳುವ ಅವಶ್ಯಕತೆ ಇದೆ ಎಂದು ಹಿರಿಯ ಸಾಹಿತಿ, ಕನ್ನಡ ಪುಸ್ತಕ ಪ್ರಾಧಿಕಾರದ ಜಿಲ್ಲಾ ಗ್ರಂಥಾಲಯ ಅನುಷ್ಠಾನ ಸಮಿತಿಯ ಸಂಚಾಲಕ, ಪ್ರಕಾಶಕ ಎ.ಎಸ್. ಮಕಾನದಾರ ಅಭಿಪ್ರಾಯಪಟ್ಟರು.
ಕರ್ನಾಟಕ ರಾಜ್ಯ ಸರ್ಕಾರಿ, ಅರೆ ಸರ್ಕಾರಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ನೌಕರರ ಸಂಘದ ರಾಜ್ಯ ಸಮಾವೇಶದ ಪೂರ್ವಭಾವಿ ಸಿದ್ಧತಾ ಸಭೆ ಹಾಗೂ ಕಾರ್ಯಾಗಾರ ಅಂಗವಾಗಿ ಬೆಂಗಳೂರಿನ ಬಿ.ಬಿ.ಎಂ.ಪಿ ಮುಖ್ಯ ಕಚೇರಿಯ ಡಾ. ರಾಜ್‌ಕುಮಾರ್ ಗಾಜಿನ ಮನೆ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ನ್ಯಾಯಾಂಗ ಇಲಾಖೆಯ ಸಹೋದ್ಯೋಗಿ ಶಫಿವುಲ್ಲ ರಚಿಸಿದ “ಸಮಾನತೆಯ ಬೆಳಕು ಡಾ. ಬಿ.ಆರ್. ಅಂಬೇಡ್ಕರ್” ಕೃತಿಯನ್ನು ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.
ರಾಜ್ಯದ 240 ತಾಲೂಕು ಘಟಕಗಳು ಹಾಗೂ 32 ಜಿಲ್ಲಾ ಘಟಕಗಳ ಪದಾಧಿಕಾರಿಗಳು ಸಭೆಯಲ್ಲಿ ಭಾಗವಹಿಸಿ, ವಿವಿಧ ಇಲಾಖೆಗಳ ಸರ್ಕಾರಿ ಮತ್ತು ಅರೆ ಸರ್ಕಾರಿ ನೌಕರರು ಸೇವಾ ಅವಧಿಯಲ್ಲಿ ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಚರ್ಚಿಸಿದರು. ಉನ್ನತ ಅಧಿಕಾರಿಗಳು, ಸಾರ್ವಜನಿಕರು ಹಾಗೂ ರಾಜಕೀಯ ವ್ಯಕ್ತಿಗಳಿಂದ ನಡೆಯುತ್ತಿರುವ ಅನ್ಯಾಯ, ದಬ್ಬಾಳಿಕೆ, ದೌರ್ಜನ್ಯ ಮತ್ತು ಶೋಷಣೆಯನ್ನು ತಡೆಗಟ್ಟಲು ಸರ್ಕಾರದ ಗಮನ ಸೆಳೆಯುವ ಕುರಿತು ಸಭೆಯಲ್ಲಿ ಒತ್ತಾಯಿಸಲಾಯಿತು.
2026ನೇ ಸಾಲಿನ ಸದಸ್ಯತ್ವ ನೋಂದಣಿಯನ್ನು ರಾಜ್ಯದ ಎಲ್ಲಾ 84 ಇಲಾಖೆಗಳ ಸರ್ಕಾರಿ ಹಾಗೂ ಅರೆ ಸರ್ಕಾರಿ ನೌಕರರು ಮಾಡಿಕೊಳ್ಳುವಂತೆ ಜಾಗೃತಿ ಮೂಡಿಸುವ ನಿರ್ಧಾರ ಕೈಗೊಳ್ಳಲಾಯಿತು. ಬೆಳಗಾವಿ ವಿಭಾಗೀಯ, ಮೈಸೂರು ವಿಭಾಗೀಯ ಹಾಗೂ ಬೆಂಗಳೂರು ರಾಜ್ಯ ಸಮಾವೇಶಗಳನ್ನು ಶೀಘ್ರದಲ್ಲೇ ಆಯೋಜಿಸಲು ತೀರ್ಮಾನಿಸಲಾಯಿತು.
ರಾಜ್ಯದಲ್ಲಿ ಹಲವು ವರ್ಷಗಳಿಂದ ಖಾಲಿ ಉಳಿದಿರುವ ಬ್ಯಾಕ್‌ಲಾಗ್ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಬೇಕು ಹಾಗೂ ಎಲ್ಲಾ ಇಲಾಖೆಗಳಲ್ಲಿ ರೋಸ್ಟರ್ ಬಿಂದುಗಳನ್ನು ಕಡ್ಡಾಯವಾಗಿ ಜಾರಿಗೊಳಿಸಬೇಕು ಎಂದು ಸಭೆ ಸರ್ವಾನುಮತದಿಂದ ನಿರ್ಣಯ ಕೈಗೊಂಡಿತು.
ಸಭೆಯಲ್ಲಿ ಸಂಘದ ರಾಜ್ಯಾಧ್ಯಕ್ಷ ಮಹೇಶ್ ಸಿ. ಹುಬಳ್ಳಿ, ರಾಜ್ಯ ಕಾರ್ಯಾಧ್ಯಕ್ಷ ಜೈ ಭೀಮ್, ರಾಜ್ಯ ಕಾರ್ಯಾಧ್ಯಕ್ಷ ಅನಿಲ್ ಕುಮಾರ್, ನ್ಯಾಯಾಂಗ ಇಲಾಖೆ ಪ್ರಧಾನ ಕಾರ್ಯದರ್ಶಿ ಶಶಿಕಲಾ, ರಾಜ್ಯ ಪ್ರಧಾನ ಕಾರ್ಯದರ್ಶಿ ಸುಧಾಕರ್ ಎಸ್. ಜಡಗಿ, ಬೆಂಗಳೂರು ನಗರ ಜಿಲ್ಲಾಧ್ಯಕ್ಷ ಶ್ರೀಧರ್ ಕೊಟ್ರೆ, ಜಿಲ್ಲಾ ಗೌರವಾಧ್ಯಕ್ಷ ನಾಗರಾಜ್, ರಾಜ್ಯ ಉಪಾಧ್ಯಕ್ಷ ಮುನಿಕೃಷ್ಣಪ್ಪ, ನ್ಯಾಯಾಂಗ ಇಲಾಖೆ ರಾಜ್ಯ ಪದಾಧಿಕಾರಿಗಳಾದ ಸಂಗಮ ಫರ್ತಾಬಾದ್, ಸುನಿತಾ ಕೊಂಬಿನ್, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಗೀತಾ ಮೇಲಿನಕೇರಿ, ಅಶೋಕ್ ಕಲಾದಗಿ, ರವಿ ಹಾದಿಮನಿ, ಶಿಕ್ಷಣಪ್ಪ ಮಂಟಾಳೆ, ಬೆಳಗಾವಿ ಜಿಲ್ಲಾಧ್ಯಕ್ಷ ಮಹದೇವ ಐಹೊಳೆ, ರಾಜ್ಯ ಜಂಟಿ ಕಾರ್ಯದರ್ಶಿಗಳಾದ ಗೋವಿಂದ ಸಣ್ಣಕ್ಕಿ ಹಾಗೂ ಅಂಬಿಕಾ ಗಾಯಕ್ವಾಡ್ ಸೇರಿದಂತೆ ಅನೇಕ ಪದಾಧಿಕಾರಿಗಳು ಭಾಗವಹಿಸಿದ್ದರು.
ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಕರ್ನಾಟಕ ರಾಜ್ಯ ನ್ಯಾಯಾಂಗ ಇಲಾಖೆ ನೌಕರರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯೆ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘದ ಉಪಾಧ್ಯಕ್ಷೆ ಡಾ. ಮಲ್ಲಿಕಾ ಎಂ. ದಾವಣಗೆರೆ, ಕವಿ-ಕಲಾವಿದ ಹಾಗೂ ಸಿನಿಮಾ ನಿರ್ದೇಶಕ ಹರ್ಷ ಹಜರತ್ ಅಲಿ, ಸೌರಭ ಸಾಂಸ್ಕೃತಿಕ ವೇದಿಕೆಯ ರಹಿಮಾನ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
 “ಅನ್ಯಾಯ, ದಬ್ಬಾಳಿಕೆ ಮತ್ತು ಶೋಷಣೆಯನ್ನು ತಡೆಗಟ್ಟಲು ಸಂಘಟಿತ ಹೋರಾಟ ಅಗತ್ಯ. ಸಮಾನತೆ ಮತ್ತು ಸಾಮಾಜಿಕ ನ್ಯಾಯದ ಆಶಯಗಳು ಬಲವಾಗಬೇಕು.”
ಎ.ಎಸ್. ಮಕಾನದಾರ, ಸಾಹಿತಿ

ಬಿರುಗಾಳಿ ಅಬ್ಬರಕ್ಕೆ ಮರ ಉರುಳಿ ಬಸ್ ಜಖಂ!

ವಿಜಯಸಾಕ್ಷಿ ಸುದ್ದಿ, ನರೇಗಲ್ಲ: ಮಂಗಳವಾರ ಸಂಜೆ ನರೇಗಲ್ಲ ಹೋಬಳಿಯಲ್ಲಿ ಬೀಸಿದ ಬಿರುಗಾಳಿ ಹಾಗೂ ರಭಸದ ಮಳೆಗೆ ಮರವೊಂದು ಉರುಳಿ ಶಾಲಾ ವಾಹನ ಜಖಂಗೊಂಡ ಘಟನೆ ನಡೆದಿದೆ.
ಪಟ್ಟಣದ ಶ್ರೀ ಅನ್ನದಾನೇಶ್ವರ ಮಠದ ಆವರಣದಲ್ಲಿದ್ದ ತೇಗಿನ ಮರದ ದೊಡ್ಡ ಕೊಂಬೆ ಮುರಿದು ವಿದ್ಯುತ್ ತಂತಿಯ ಮೇಲೆ ಬಿದ್ದ ಪರಿಣಾಮ, ವಿದ್ಯುತ್ ಕಂಬಗಳು ಮುರಿದು ಮುಂದೆ ನಿಂತಿದ್ದ ಶಾಲಾ ವಾಹನದ ಮೇಲೆ ಬಿದ್ದವು. ಪರಿಣಾಮ ಬಸ್‌ಗೆ ಹಾನಿಯಾಗಿದೆ.
ಸಂಜೆ 5 ಗಂಟೆ ಸುಮಾರಿಗೆ ಆರಂಭವಾದ ಮಳೆ ಗುಡುಗು, ಮಿಂಚು ಹಾಗೂ ಸಿಡಿಲಿನೊಂದಿಗೆ ಆರ್ಭಟಿಸಿತು. ಸುಮಾರು ಒಂದೂವರೆ ಗಂಟೆಗಳ ಕಾಲ ಸುರಿದ ಧಾರಾಕಾರ ಮಳೆಯಿಂದ ನರೇಗಲ್ಲ ಪಟ್ಟಣದಲ್ಲಿ ಕೆಲಕಾಲ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಬಿರುಗಾಳಿಯ ರಭಸಕ್ಕೆ ಕೆಲ ಮನೆಗಳ ತಗಡುಗಳು ಸಪ್ಪಳ ಮಾಡಿದ್ದು, ಜನರು ಆತಂಕಗೊಂಡರು.
ಈಗಾಗಲೇ ಹೆಸರು ಬಿತ್ತಿದ ರೈತರಿಗೆ ಮಳೆ ಆಸರೆಯಾಗಿದ್ದು, ಮುಂದಿನ ಬಿತ್ತನೆ ಕಾರ್ಯಕ್ಕೂ ಹೊಲಗದ್ದೆಗಳಲ್ಲಿ ತೇವಾಂಶ ಹೆಚ್ಚಾಗಿದೆ.
ಬುಧವಾರ ಬೆಳಗ್ಗೆಯೂ ಮೋಡ ಕವಿದ ವಾತಾವರಣ ಮುಂದುವರಿದಿದ್ದು, ಕಾಲೇಜು ಸಮಯದಲ್ಲಿ ಸುರಿದ ಮಳೆಯಿಂದ ವಿದ್ಯಾರ್ಥಿಗಳು ಪರದಾಡಬೇಕಾಯಿತು.
ಕಳೆದ ಮಾರ್ಚ್ ತಿಂಗಳಿಂದ ತೀವ್ರ ಬಿಸಿಲಿಗೆ ಬೇಸತ್ತಿದ್ದ ಜನರಿಗೆ ಈ ಮಳೆ ತಂಪಿನ ಅನುಭವ ನೀಡಿದ್ದು, “ನರೇಗಲ್ಲ ಈಗ ಥಂಡಾ ಕೂಲ್” ಎಂದು ಸಾರ್ವಜನಿಕರು ಹರ್ಷ ವ್ಯಕ್ತಪಡಿಸಿದರು.

ಗರ್ಭಿಣಿಯರಿಗೆ ಮುಖ್ಯ ಸೂಚನೆ: ಮೂತ್ರ ಸೋಂಕು ಲಕ್ಷಣಗಳನ್ನು ನಿರ್ಲಕ್ಷ್ಯ ಮಾಡಬೇಡಿ!

ಗರ್ಭಾವಸ್ಥೆ ಮಹಿಳೆಯ ಜೀವನದ ಅತ್ಯಂತ ವಿಶೇಷ ಹಂತವಾಗಿದ್ದರೂ, ಈ ಸಮಯದಲ್ಲಿ ದೇಹದಲ್ಲಿ ಹಲವಾರು ಹಾರ್ಮೋನಲ್ ಹಾಗೂ ಶಾರೀರಿಕ ಬದಲಾವಣೆಗಳು ಸಂಭವಿಸುತ್ತವೆ. ಇದರಲ್ಲಿ ಯೂರಿನರಿ ಟ್ರ್ಯಾಕ್ಟ್ ಇನ್ಫೆಕ್ಷನ್ ಕೂಡ ಪ್ರಮುಖ ಆರೋಗ್ಯ ಸಮಸ್ಯೆಯಾಗಿ ಕಾಣಿಸಿಕೊಳ್ಳುತ್ತದೆ ಎಂದು ತಜ್ಞರು ಎಚ್ಚರಿಸಿದ್ದಾರೆ.

ಸರ್ ಗಂಗಾರಾಮ್ ಆಸ್ಪತ್ರೆಯ ತಜ್ಞೆ ಡಾ. ಆಭಾ ಮಜುಂದಾರ್ ಅವರ ಪ್ರಕಾರ, ಗರ್ಭಾವಸ್ಥೆಯಲ್ಲಿ ಪ್ರೊಜೆಸ್ಟೆರೋನ್ ಹಾರ್ಮೋನ್ ಪ್ರಮಾಣ ಹೆಚ್ಚಾಗುವುದರಿಂದ ಯೂರಿನರಿ ಸಿಸ್ಟಂ ಸಡಿಲಗೊಳ್ಳುತ್ತದೆ. ಇದರಿಂದ ಮೂತ್ರವು ಸಂಪೂರ್ಣವಾಗಿ ಹೊರಬರದೇ ಉಳಿಯುವ ಸಾಧ್ಯತೆ ಹೆಚ್ಚಾಗುತ್ತದೆ. ಜೊತೆಗೆ ಗರ್ಭಾಶಯದ ಗಾತ್ರ ಹೆಚ್ಚಾದಂತೆ ಮೂತ್ರ ಮಾರ್ಗದ ಮೇಲೆ ಒತ್ತಡ ಉಂಟಾಗಿ ಮೂತ್ರದ ಹರಿವು ನಿಧಾನಗೊಳ್ಳುತ್ತದೆ.

ಅದರ ಜೊತೆಗೆ ಗರ್ಭಿಣಿಯರ ಮೂತ್ರದಲ್ಲಿ ಸಕ್ಕರೆ ಮತ್ತು ಅಮಿನೋ ಆಮ್ಲಗಳ ಪ್ರಮಾಣ ಸ್ವಲ್ಪ ಹೆಚ್ಚಾಗುವುದರಿಂದ ಬ್ಯಾಕ್ಟೀರಿಯಾ ಬೆಳೆಯಲು ಅನುಕೂಲವಾಗುತ್ತದೆ. ಇದರಿಂದ ಯೂರಿನ್ ಇನ್ಫೆಕ್ಷನ್ ಅಪಾಯ ಹೆಚ್ಚುತ್ತದೆ ಎಂದು ತಜ್ಞರು ತಿಳಿಸಿದ್ದಾರೆ.

ಯೂರಿನ್ ಇನ್ಫೆಕ್ಷನ್ ಲಕ್ಷಣಗಳು:

  • ಮೂತ್ರ ವಿಸರ್ಜನೆ ವೇಳೆ ಉರಿ ಅಥವಾ ನೋವು
  • ಪದೇಪದೇ ಮೂತ್ರ ಬರುವುದು
  • ಹೊಟ್ಟೆ ಕೆಳಭಾಗ ಮತ್ತು ಬೆನ್ನು ನೋವು
  • ಗಾಢ ಹಳದಿ ಬಣ್ಣದ ಮೂತ್ರ
  • ದುರ್ವಾಸನೆ
  • ಕೆಲವೊಮ್ಮೆ ಜ್ವರ ಅಥವಾ ನಡುಕ

ಮುನ್ನೆಚ್ಚರಿಕೆ ಕ್ರಮಗಳು:

  • ಹೆಚ್ಚು ನೀರು ಕುಡಿಯುವುದು
  • ನೀರಿನಾಂಶ ಹೆಚ್ಚಿರುವ ಹಣ್ಣುಗಳ ಸೇವನೆ
  • ವೈಯಕ್ತಿಕ ಸ್ವಚ್ಛತೆಗೆ ಆದ್ಯತೆ ನೀಡುವುದು
  • ಸಕ್ಕರೆ ಹಾಗೂ ಸಿಹಿ ಪದಾರ್ಥಗಳ ಸೇವನೆ ಕಡಿಮೆ ಮಾಡುವುದು
  • ಮೂತ್ರವನ್ನು ತಡೆಹಿಡಿಯಬಾರದು
  • ಹತ್ತಿಯ ಬಟ್ಟೆ ಧರಿಸುವುದು

ತಜ್ಞರ ಪ್ರಕಾರ, ಗರ್ಭಾವಸ್ಥೆಯಲ್ಲಿ ಯೂರಿನ್ ಇನ್ಫೆಕ್ಷನ್ ಲಕ್ಷಣಗಳು ಕಂಡುಬಂದ ತಕ್ಷಣ ವೈದ್ಯರನ್ನು ಸಂಪರ್ಕಿಸುವುದು ಅತ್ಯಂತ ಮುಖ್ಯ.

ಪಾಲಕರ ಆಚಾರ-ವಿಚಾರವೇ ಮಕ್ಕಳಿಗೆ ಆದರ್ಶ: ಮಂಜುನಾಥ ಅಕ್ಕಸಾಲಿ

ವಿಜಯಸಾಕ್ಷಿ ಸುದ್ದಿ, ಬೆಟಗೇರಿ: ಮಕ್ಕಳ ವ್ಯಕ್ತಿತ್ವ ವಿಕಸನ ಸಾಕಾರಗೊಳ್ಳಬೇಕಾದರೆ ಪಾಲಕರು ಮಕ್ಕಳ ಆಸೆ-ಆಕಾಂಕ್ಷೆಗಳನ್ನು ಗಮನದಲ್ಲಿಟ್ಟುಕೊಂಡು ಸೂಕ್ತ ಅವಕಾಶ ಕಲ್ಪಿಸಬೇಕು ಎಂದು ಗದಗ ಸರಕಾರಿ ಪದವಿ ಪೂರ್ವ ಮಹಾವಿದ್ಯಾಲಯದ ಕನ್ನಡ ಉಪನ್ಯಾಸಕ ಮಂಜುನಾಥ ಅಕ್ಕಸಾಲಿ ಹೇಳಿದರು.
ಬೆಟಗೇರಿಯ ಕಾಳಿಕಾದೇವಿ ದೇವಸ್ಥಾನದಲ್ಲಿ ಆಯೋಜಿಸಿದ್ದ ಮಾಸಿಕ ಚಿಂತನಗೋಷ್ಠಿ, ಮೌನೇಶ್ವರ ವಚನ ಪಠಣ, ಭಕ್ತರ ಹುಟ್ಟುಹಬ್ಬ ಹಾಗೂ ವಿವಾಹ ವಾರ್ಷಿಕೋತ್ಸವ ಸಮಾರಂಭದಲ್ಲಿ ಅತಿಥಿ ಉಪನ್ಯಾಸಕರಾಗಿ ಅವರು ಮಾತನಾಡಿದರು.
ಮಕ್ಕಳ ಆಸಕ್ತಿಗೆ ಅನುಗುಣವಾಗಿ ಓದು, ಕ್ರೀಡೆ ಹಾಗೂ ವಿವಿಧ ಚಟುವಟಿಕೆಗಳಲ್ಲಿ ಭಾಗವಹಿಸಲು ವೇದಿಕೆ ಒದಗಿಸಬೇಕು. ಇಷ್ಟವಿಲ್ಲದ ವಿಷಯಗಳನ್ನು ಓದಲು ಒತ್ತಾಯಿಸಬಾರದು. ಪ್ರತಿಯೊಬ್ಬ ಮಗುವಿನ ಪ್ರತಿಭೆ ವಿಭಿನ್ನವಾಗಿದ್ದು, ಎಲ್ಲರನ್ನೂ ಒಂದೇ ಮಾನದಂಡದಿಂದ ಅಳೆಯುವುದು ತಪ್ಪು ಎಂದು ಹೇಳಿದರು.
ಮಕ್ಕಳು ಸನ್ಮಾರ್ಗದಲ್ಲಿ ನಡೆದು ಆದರ್ಶ ವ್ಯಕ್ತಿಗಳಾಗಿ ಬೆಳೆಯಬೇಕಾದರೆ ಪಾಲಕರ ಆಚಾರ-ವಿಚಾರ, ನಡೆ-ನುಡಿ ಹಾಗೂ ಜೀವನಶೈಲಿ ಪ್ರಮುಖ ಪಾತ್ರ ವಹಿಸುತ್ತದೆ. ಮಕ್ಕಳ ವರ್ತನೆಗಳನ್ನು ಸೂಕ್ಷ್ಮವಾಗಿ ಗಮನಿಸಿ ಅವರಲ್ಲಿರುವ ಪ್ರತಿಭೆಯನ್ನು ಅನಾವರಣಗೊಳಿಸಿದಾಗ ವ್ಯಕ್ತಿತ್ವ ವಿಕಸನ ಸಾಧ್ಯವಾಗುತ್ತದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಲೊಯಲಾ ಇಂಗ್ಲಿಷ್ ಮಾಧ್ಯಮ ಶಾಲೆಯ 5ನೇ ತರಗತಿ ವಿದ್ಯಾರ್ಥಿನಿ ತನ್ವಿ ಪ್ರಸನ್ನ ಅರ್ಕಸಾಲಿ ಮೌನೇಶ್ವರ ವಚನ ಪಠಣದ ಮೂಲಕ ಗಮನ ಸೆಳೆದಳು. ಬಾಲವಿನಾಯಕ ಶಾಲೆಯ ವಿದ್ಯಾರ್ಥಿನಿ ಸುಧೀಕ್ಷಾ ವಿಶ್ವನಾಥ ಕಮ್ಮಾರ ನೃತ್ಯ ಪ್ರದರ್ಶನ ನೀಡಿ ಭಕ್ತರನ್ನು ರಂಜಿಸಿದಳು.
ದೇವಸ್ಥಾನದ ಸಾಂಸ್ಕೃತಿಕ ವಿಭಾಗದ ಸಂಚಾಲಕ ವಿಶ್ವನಾಥ ಯ. ಕಮ್ಮಾರ, ವಿಜಯಕುಮಾರ ಬೆಂತೂರ, ಮಹೇಶ ಬಡಿಗೇರ ಸೇರಿದಂತೆ ಭಕ್ತರು ಕಾಳಿಕಾಸ್ತುತಿ ನೆರವೇರಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಟ್ರಸ್ಟ್ ಅಧ್ಯಕ್ಷ ಶ್ರೀಧರ ಕೊಣ್ಣೂರ ಮಾತನಾಡಿ, ಪ್ರತಿ ತಿಂಗಳು ನಡೆಯುವ ಇಂತಹ ಸಾಂಸ್ಕೃತಿಕ ಹಾಗೂ ಆಧ್ಯಾತ್ಮಿಕ ಕಾರ್ಯಕ್ರಮಗಳಿಗೆ ಸಮಾಜದ ಪ್ರತಿಯೊಬ್ಬರೂ ಭಾಗವಹಿಸಿ ಮೆರಗು ಹೆಚ್ಚಿಸಬೇಕು ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ವಿವಾಹ ವಾರ್ಷಿಕೋತ್ಸವ ಹಾಗೂ ಹುಟ್ಟುಹಬ್ಬ ಆಚರಿಸಿಕೊಂಡ ಕುಟುಂಬಗಳನ್ನು ಗೌರವಿಸಲಾಯಿತು. ದೇವಸ್ಥಾನದ ಜೀರ್ಣೋದ್ಧಾರಕ್ಕಾಗಿ ದೇಣಿಗೆ ನೀಡಿದ ದಾನಿಗಳನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಸಮಾಜದ ಮುಖಂಡರು, ಮಹಿಳಾ ಮಂಡಳದ ಪದಾಧಿಕಾರಿಗಳು, ಟ್ರಸ್ಟ್ ಸದಸ್ಯರು ಹಾಗೂ ಭಕ್ತರು ಉಪಸ್ಥಿತರಿದ್ದರು.

ತ್ಯಾಗ, ಸಮರ್ಪಣೆ- ಮಾನವೀಯತೆಯ ಸಂದೇಶವೇ ಬಕ್ರೀದ್

ಮುಸ್ಲಿಮರ ಪ್ರಮುಖ ಧಾರ್ಮಿಕ ಹಬ್ಬಗಳಲ್ಲಿ ಒಂದಾದ ಬಕ್ರೀದ್ ಅಥವಾ ಈದುಲ್ ಅಝ್ಹಾವನ್ನು ವಿಶ್ವದಾದ್ಯಂತ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಗುತ್ತದೆ. ಇಸ್ಲಾಮೀ ಕ್ಯಾಲೆಂಡರಿನ ದುಲ್‌ಹಜ್ ತಿಂಗಳ 10ರಂದು ಆಚರಿಸಲಾಗುವ ಈ ಹಬ್ಬವು ತ್ಯಾಗ, ಸಮರ್ಪಣೆ, ದೇವಭಕ್ತಿ ಹಾಗೂ ಮಾನವೀಯ ಮೌಲ್ಯಗಳ ಸಂಕೇತವಾಗಿದೆ.
ಸುಮಾರು ಐದು ಸಾವಿರ ವರ್ಷಗಳ ಹಿಂದಿನ ಪ್ರವಾದಿ ಇಬ್ರಾಹೀಮ್ (ಅ) ಅವರ ಬದುಕಿನ ಘಟನೆಗಳನ್ನು ಬಕ್ರೀದ್ ಹಬ್ಬ ನೆನಪಿಸುತ್ತದೆ. ಯಹೂದಿಗಳು, ಕ್ರೈಸ್ತರು ಹಾಗೂ ಮುಸ್ಲಿಮರು ಸಮಾನವಾಗಿ ಗೌರವಿಸುವ ಮಹಾನ್ ವ್ಯಕ್ತಿತ್ವವಾಗಿರುವ ಇಬ್ರಾಹೀಮ್ (ಅಬ್ರಾಹಂ) ಅವರು ಏಕದೇವತ್ವದ ಸಂದೇಶ ಸಾರಿದ ಪ್ರವಾದಿಯಾಗಿದ್ದರು. ಇರಾಕ್‌ನ ಉರ್ ನಗರದಲ್ಲಿ ಜನಿಸಿದ ಅವರು, ದುಷ್ಟ ರಾಜ ನಮ್ರೂದ್‌ನ ದಬ್ಬಾಳಿಕೆ ವಿರುದ್ಧ ಧ್ವನಿ ಎತ್ತಿ ಸಮಾಜ ಸುಧಾರಣೆಯ ಹಾದಿ ಹಿಡಿದರು. ಅನೇಕ ಸಂಕಷ್ಟ, ಹಿಂಸೆ, ದೇಶಭ್ರಷ್ಟ ಪರಿಸ್ಥಿತಿಗಳ ನಡುವೆಯೂ ದೇವರ ಮಾರ್ಗದಿಂದ ಹಿಂದೆ ಸರಿಯಲಿಲ್ಲ.
ಪ್ರವಾದಿ ಇಬ್ರಾಹೀಮ್ (ಅ) ಅವರ ಬದುಕು ಅನೇಕ ಸತ್ವಪರೀಕ್ಷೆಗಳಿಂದ ಕೂಡಿತ್ತು. ವೃದ್ಧಾಪ್ಯದಲ್ಲಿ ಪತ್ನಿ ಹಾಜಿರಾ ಮತ್ತು ಪುಟ್ಟ ಮಗ ಇಸ್ಮಾಯಿಲ್ ಅವರನ್ನು ಅರೇಬಿಯಾದ ನಿರ್ಜನ ಮರುಭೂಮಿಯಲ್ಲಿ ಬಿಟ್ಟುಬರಬೇಕಾದ ಸಂದರ್ಭ ಎದುರಾದರೂ ದೇವಾಜ್ಞೆಗೆ ಶರಣಾದರು. ದಾಹದಿಂದ ಅಳುತ್ತಿದ್ದ ಮಗುವಿಗಾಗಿ ತಾಯಿ ಹಾಜಿರಾ ಸಫಾ ಮತ್ತು ಮರ್ವಾ ಬೆಟ್ಟಗಳ ನಡುವೆ ನೀರಿಗಾಗಿ ಓಡಾಡಿದ ಘಟನೆ ಇಂದಿಗೂ ಹಜ್ ಯಾತ್ರೆಯ ಪ್ರಮುಖ ಆಚರಣೆಯಾಗಿದೆ. ಇದೇ ವೇಳೆ ಇಸ್ಮಾಯಿಲ್ ಅವರ ಕಾಲಿನ ಬಳಿಯಲ್ಲಿ ಉಕ್ಕಿಬಂದ ನೀರಿನ ಚಿಲುಮೆಯೇ ಪವಿತ್ರ ಝಮ್ ಝಮ್ ಎಂದು ಪ್ರಸಿದ್ಧಿಯಾಯಿತು.
ಇಬ್ರಾಹೀಮ್ (ಅ) ಅವರ ಪುತ್ರ ಪ್ರೀತಿ ಹಾಗೂ ದೇವಭಕ್ತಿಯನ್ನು ಪರೀಕ್ಷಿಸಲು ಅಲ್ಲಾಹನು ಪುತ್ರ ಇಸ್ಮಾಯಿಲ್ ಅವರನ್ನು ಬಲಿಕೊಡಬೇಕೆಂದು ಆದೇಶಿಸಿದನೆಂದು ಇಸ್ಲಾಮಿನ ಇತಿಹಾಸ ಹೇಳುತ್ತದೆ. ದೇವರ ಆಜ್ಞೆಗೆ ತಲೆಬಾಗಿದ ಇಬ್ರಾಹೀಮ್ (ಅ) ಪುತ್ರನನ್ನು ಬಲಿಕೊಡಲು ಮುಂದಾದಾಗ, ಅಲ್ಲಾಹನು ಟಗರನ್ನು ಬಲಿಯಾಗಿ ಅರ್ಪಿಸುವಂತೆ ಸೂಚಿಸಿದನು. ಈ ಘಟನೆಯ ಸ್ಮರಣಾರ್ಥವೇ ಬಕ್ರೀದ್ ಹಬ್ಬ ಆಚರಿಸಲಾಗುತ್ತದೆ.
ಹಬ್ಬದ ದಿನ ಮುಸ್ಲಿಮರು ಮಸೀದಿ ಹಾಗೂ ಈದ್ಗಾಗಳಲ್ಲಿ ವಿಶೇಷ ನಮಾಜ್ ಮತ್ತು ಖುತ್ಬಾಗಳಲ್ಲಿ ಭಾಗವಹಿಸುತ್ತಾರೆ. ಹೊಸ ಉಡುಗೆ ತೊಟ್ಟು ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡು ಬಂಧು-ಮಿತ್ರರ ಮನೆಗಳಿಗೆ ಭೇಟಿ ನೀಡುತ್ತಾರೆ. ಬಲಿ ಅರ್ಪಿಸಿದ ಪ್ರಾಣಿಯ ಮಾಂಸವನ್ನು ಮೂರು ಭಾಗಗಳಾಗಿ ಹಂಚಿ, ಒಂದು ಭಾಗವನ್ನು ಬಡವರಿಗೆ ನೀಡುವ ಮೂಲಕ ಸಹೋದರತ್ವ ಮತ್ತು ಹಂಚಿಕೆ ಸಂಸ್ಕೃತಿಯನ್ನು ಈ ಹಬ್ಬ ಸಾರುತ್ತದೆ.
ಬಕ್ರೀದ್ ಹಬ್ಬವು ಕೇವಲ ಧಾರ್ಮಿಕ ಆಚರಣೆ ಮಾತ್ರವಲ್ಲ; ಅದು ತ್ಯಾಗ, ದಾನಧರ್ಮ, ಸಹಾನುಭೂತಿ, ಸಮಾನತೆ ಹಾಗೂ ಮಾನವೀಯ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಸಂದೇಶವನ್ನು ಸಾರುವ ಹಬ್ಬವಾಗಿದೆ.
— ಡಾ. ತಯಬಅಲಿ ಅ. ಹೊಂಬಳ, ಗದಗ

ಖಾಸಗಿ ಶಾಲೆಗಳಿಗೆ ಸರ್ಕಾರಿ ಶಾಲೆಯ ಟಕ್ಕರ್!

ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ಖಾಸಗಿ ಶಾಲೆಗಳ ಪೈಪೋಟಿಯ ನಡುವೆಯೂ ಸರ್ಕಾರಿ ಶಾಲೆಗಳ ದಾಖಲಾತಿ ಹೆಚ್ಚಿಸಲು ಶಿರಹಟ್ಟಿ ತಾಲೂಕಿನ ಬೆಳ್ಳಟ್ಟಿ ಗ್ರಾಮದ ಹೊಸ ಬಡಾವಣೆಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ವಿನೂತನ ಹೆಜ್ಜೆ ಇಟ್ಟಿದ್ದು, ಹೊಸದಾಗಿ ದಾಖಲಾಗುವ ಪ್ರತಿಯೊಬ್ಬ ವಿದ್ಯಾರ್ಥಿಯ ಹೆಸರಿನಲ್ಲಿ ₹1000 ಠೇವಣಿ ಇಡುವ ಘೋಷಣೆ ಮಾಡಿದೆ.
ಈ ವಿಶಿಷ್ಟ ಪ್ರಯತ್ನ ಇದೀಗ ಸಾರ್ವಜನಿಕ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದ್ದು, ಸರ್ಕಾರಿ ಶಾಲೆಗಳ ಮೇಲಿನ ವಿಶ್ವಾಸ ಹೆಚ್ಚಿಸುವ ಕೆಲಸ ಮಾಡುತ್ತಿದೆ.
1ರಿಂದ 5ನೇ ತರಗತಿ ಮಕ್ಕಳಿಗೆ ವಿಶೇಷ ಸೌಲಭ್ಯ
ಪ್ರಸ್ತುತ ಶೈಕ್ಷಣಿಕ ವರ್ಷದಿಂದ ಶಾಲೆಗೆ 1ರಿಂದ 5ನೇ ತರಗತಿಯವರೆಗೆ ದಾಖಲಾಗುವ ಪ್ರತಿಯೊಂದು ವಿದ್ಯಾರ್ಥಿಯ ಹೆಸರಿನಲ್ಲಿ ರಾಷ್ಟ್ರೀಕೃತ ಬ್ಯಾಂಕ್‌ನಲ್ಲಿ ₹1000 ಠೇವಣಿ ಇಡಲಾಗುತ್ತಿದೆ. ವಿದ್ಯಾರ್ಥಿಗಳು ಮುಂದಿನ ದಿನಗಳಲ್ಲಿ 10ನೇ ತರಗತಿ ಹಾಗೂ ಪಿಯುಸಿ ಶಿಕ್ಷಣಕ್ಕೆ ಇದು ಸಹಕಾರಿಯಾಗಲಿದೆ ಎಂಬುದು ಶಿಕ್ಷಕರ ಅಭಿಪ್ರಾಯವಾಗಿದೆ.
ಇದರ ಜೊತೆಗೆ ಉಚಿತ ಶಾಲಾ ಬ್ಯಾಗ್, ಟೈ-ಬೆಲ್ಟ್, ಶಾಲೆಯ ಹೆಸರುಳ್ಳ ಟೀ-ಶರ್ಟ್ ಹಾಗೂ ಮಗ್ಗಿ ಪುಸ್ತಕಗಳನ್ನು ಸಹ ನೀಡಲು ಶಾಲೆ ಮುಂದಾಗಿದೆ.
ಗ್ರಾಮೀಣ ಪ್ರದೇಶದ ಸರ್ಕಾರಿ ಶಾಲೆಯಾದರೂ ಇಲ್ಲಿ ಸ್ಮಾರ್ಟ್ ಕ್ಲಾಸ್ ವ್ಯವಸ್ಥೆ ಮಾಡಲಾಗಿದ್ದು, ಟಿವಿ ಹಾಗೂ ಯೂಟ್ಯೂಬ್ ಆಧಾರಿತ ವಿಡಿಯೋ ಪಾಠಗಳ ಮೂಲಕ ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದೆ.
ಶುದ್ಧ ಕುಡಿಯುವ ನೀರು, ಶೌಚಾಲಯ ಹಾಗೂ ಎಲ್ಲ ತರಗತಿಗಳಲ್ಲೂ ಫ್ಯಾನ್ ವ್ಯವಸ್ಥೆ ಇರುವುದರಿಂದ ಶಾಲೆ ಮಕ್ಕಳಿಗೆ ಆಕರ್ಷಕ ಶಿಕ್ಷಣ ವಾತಾವರಣ ಒದಗಿಸಿದೆ.
ಸರ್ಕಾರದಿಂದ ಪಠ್ಯಪುಸ್ತಕ, ಸಮವಸ್ತ್ರ, ಶೂ-ಸಾಕ್ಸ್, ಬಿಸಿಯೂಟ ಸೇರಿದಂತೆ ಅನೇಕ ಸೌಲಭ್ಯಗಳು ದೊರೆಯುತ್ತಿದ್ದರೂ ಹಲವು ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ವರ್ಷದಿಂದ ವರ್ಷಕ್ಕೆ ಕುಸಿಯುತ್ತಿದೆ.
ಆದರೆ ಬೆಳ್ಳಟ್ಟಿ ಶಾಲೆಯ ಮುಖ್ಯೋಪಾಧ್ಯಾಯರು ಮತ್ತು ಶಿಕ್ಷಕರು ಸಮುದಾಯದ ಸಹಕಾರದೊಂದಿಗೆ ಮಕ್ಕಳ ದಾಖಲಾತಿ ಹೆಚ್ಚಿಸಲು ಹೊಸ ಪ್ರಯತ್ನ ಕೈಗೊಂಡಿರುವುದು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ.
“ಗ್ರಾಮದ ಸಮುದಾಯ ಮತ್ತು ಶಿಕ್ಷಕರ ಸಹಕಾರದಿಂದ ಮಕ್ಕಳನ್ನು ಸರ್ಕಾರಿ ಶಾಲೆಯತ್ತ ಆಕರ್ಷಿಸಲು ಈ ಯೋಜನೆ ರೂಪಿಸಲಾಗಿದೆ. ಹೊಸದಾಗಿ ದಾಖಲಾಗುವ ವಿದ್ಯಾರ್ಥಿಗಳಿಗೆ ₹1000 ಠೇವಣಿ, ಶಾಲಾ ಬ್ಯಾಗ್, ಟೈ-ಬೆಲ್ಟ್, ಟೀ-ಶರ್ಟ್ ಹಾಗೂ ಮಗ್ಗಿ ಪುಸ್ತಕಗಳನ್ನು ಉಚಿತವಾಗಿ ನೀಡಲಾಗುತ್ತದೆ.” 
ಗಿರೀಶ ಕೊಡಬಾಳ, ಮುಖ್ಯೋಪಾಧ್ಯಾಯರು
“ಶಾಲೆಯಲ್ಲಿ ಹೊಸದಾಗಿ ದಾಖಲಾಗುವ ವಿದ್ಯಾರ್ಥಿಗಳಿಗೆ ₹1000 ಠೇವಣಿ ಹಾಗೂ ಉಚಿತ ಶೈಕ್ಷಣಿಕ ಸಾಮಗ್ರಿ ನೀಡುತ್ತಿರುವುದು ಶಿಕ್ಷಣ ಮತ್ತು ದಾಖಲಾತಿ ಹೆಚ್ಚಿಸಲು ಮಾದರಿಯಾದ ಕಾರ್ಯಕ್ರಮ. ಸರ್ಕಾರಿ ಶಾಲೆಗಳ ಉಳಿವಿಗೆ ಶಿಕ್ಷಕರ ಇಚ್ಛಾಶಕ್ತಿ ಮತ್ತು ಸಮುದಾಯದ ಸಹಕಾರವೇ ದೊಡ್ಡ ಬಲ.”
ಆರ್.ಎಸ್. ಬುರಡಿ, ಉಪನಿರ್ದೇಶಕರು
error: Content is protected !!