ಬೆಂಗಳೂರು: ಕೆಪಿಎಸ್ಸಿ (KPSC) ಅಧ್ಯಕ್ಷರ ಪುತ್ರಿ ವಿರುದ್ಧ ನಕಲಿ ಆದಾಯ ಪ್ರಮಾಣ ಪತ್ರದ ಆರೋಪದಡಿ ಎಫ್ಐಆರ್ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ಪ್ರತಿಕ್ರಿಯೆ ನೀಡಿದ್ದಾರೆ. “ನನಗೆ ಅಧಿಕಾರ ಇದ್ದರೆ ಕೆಎಟಿ (KAT) ಮತ್ತು ಕೆಪಿಎಸ್ಸಿಯನ್ನೇ ರದ್ದು ಮಾಡುತ್ತಿದ್ದೆ” ಎಂದು ಅವರು ಹೇಳಿದರು.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಕರಣದಲ್ಲಿ ನಕಲಿ ಆದಾಯ ಪ್ರಮಾಣ ಪತ್ರದ ಕುರಿತು ದೂರು ದಾಖಲಾಗಿದ್ದು, ಬುಧವಾರ ರಾತ್ರಿ ಎಫ್ಐಆರ್ ದಾಖಲಿಸಲಾಗಿದೆ. ಕೆಪಿಎಸ್ಸಿ ಸಾಂವಿಧಾನಿಕ ಸಂಸ್ಥೆಯಾಗಿರುವುದರಿಂದ ಅದರ ವಿರುದ್ಧ ಯಾವುದೇ ಕ್ರಮವನ್ನು ಕಾನೂನು ಮತ್ತು ಸಂವಿಧಾನದ ವ್ಯಾಪ್ತಿಯಲ್ಲಿಯೇ ಕೈಗೊಳ್ಳಬೇಕಾಗುತ್ತದೆ ಎಂದು ಸ್ಪಷ್ಟಪಡಿಸಿದರು.
“ಬೇಲಿಯೇ ಎದ್ದು ಹೊಲ ಮೇಯ್ದರೆ ಏನು ಮಾಡುವುದು? ಇದು ನಮ್ಮ ಕೈಯಲ್ಲಿಲ್ಲ. ನನಗೆ ಅಧಿಕಾರ ಇದ್ದರೆ ಕೆಎಟಿ ಮತ್ತು ಕೆಪಿಎಸ್ಸಿಯನ್ನೇ ರದ್ದು ಮಾಡುತ್ತಿದ್ದೆ. ಆದರೆ ಅದಕ್ಕಾಗಿ ಹೊಸ ಕಾನೂನು ತರಬೇಕಾಗುತ್ತದೆ. ಕಾನೂನು ರೂಪಿಸುವ ಅಧಿಕಾರ ಶಾಸನಸಭೆಗೆ ಇದೆ. ಎಲ್ಲರೂ ಒಟ್ಟಾಗಿ ನಿರ್ಧಾರ ಕೈಗೊಂಡರೆ ವ್ಯವಸ್ಥೆಯನ್ನು ಶುದ್ಧೀಕರಿಸಬಹುದು” ಎಂದು ಹೇಳಿದರು.
ಯುವಕರ ಭವಿಷ್ಯದೊಂದಿಗೆ ಆಟವಾಡುವುದು ಯಾವುದೇ ಕಾರಣಕ್ಕೂ ಸರಿಯಲ್ಲ ಎಂದು ಹೇಳಿದ ಅವರು, ಹುಬ್ಬಳ್ಳಿ-ಧಾರವಾಡದಲ್ಲಿ ಯಾವುದೇ ರಾಜಕೀಯ ನಾಯಕರ ಬೆಂಬಲವಿಲ್ಲದೆ ಯುವಕರು ನಡೆಸಿದ ಪ್ರತಿಭಟನೆ ಇದಕ್ಕೆ ಸಾಕ್ಷಿಯಾಗಿದೆ. ಇಂತಹ ಬೆಳವಣಿಗೆಗಳನ್ನು ಸರ್ಕಾರ ನಿರ್ಲಕ್ಷ್ಯ ಮಾಡಲು ಸಾಧ್ಯವಿಲ್ಲ ಎಂದು ತಿಳಿಸಿದರು.
ಪ್ರಕರಣದ ಸತ್ಯಾಸತ್ಯತೆ ದಾಖಲೆಗಳ ಪರಿಶೀಲನೆಯ ಬಳಿಕವೇ ಸ್ಪಷ್ಟವಾಗಲಿದೆ. ದಾಖಲೆಗಳನ್ನು ಪರಿಶೀಲಿಸದೇ ಯಾವುದೇ ತೀರ್ಮಾನಕ್ಕೆ ಬರುವುದು ಸರಿಯಲ್ಲ. ಮುಖ್ಯಮಂತ್ರಿ ಕೂಡ ನೇಮಕಾತಿ ಪ್ರಕ್ರಿಯೆಯನ್ನು ಶೀಘ್ರ ಪೂರ್ಣಗೊಳಿಸುವಂತೆ ಸೂಚಿಸಿದ್ದಾರೆ. ಭ್ರಷ್ಟಾಚಾರಕ್ಕೆ ಅವಕಾಶ ನೀಡದಂತೆ ಈಗಾಗಲೇ ಕಾನೂನು ತರಲಾಗಿದ್ದು, ಅದರ ನಿಯಮಾವಳಿಗಳನ್ನು ಒಂದು ವಾರದಿಂದ ಹತ್ತು ದಿನಗಳೊಳಗೆ ಅಂತಿಮಗೊಳಿಸುವುದಾಗಿ ಪ್ರಿಯಾಂಕ್ ಖರ್ಗೆ ಹೇಳಿದರು.
ಕೆಪಿಎಸ್ಸಿ ಅಧ್ಯಕ್ಷರ ವಿರುದ್ಧ ಕ್ರಮ ಕೈಗೊಳ್ಳುವ ಅಧಿಕಾರ ರಾಜ್ಯಪಾಲರಿಗಿದೆ. ಆದರೆ ನಕಲಿ ಆದಾಯ ಪ್ರಮಾಣ ಪತ್ರದ ಆರೋಪವು ರಾಜ್ಯ ಸರ್ಕಾರದ ವ್ಯಾಪ್ತಿಗೆ ಬರುತ್ತದೆ. ಅಗತ್ಯ ದಾಖಲೆಗಳನ್ನು ಸರ್ಕಾರ ರಾಜ್ಯಪಾಲರಿಗೆ ಸಲ್ಲಿಸಲಿದೆ. ಆಯೋಗದೊಳಗಿನ ಪಾರದರ್ಶಕತೆ ಮತ್ತು ಹೊಂದಾಣಿಕೆ ಕುರಿತು ಗಂಭೀರ ಪ್ರಶ್ನೆಗಳು ಉದ್ಭವಿಸಿದ್ದು, ಆಯೋಗವೇ ತನ್ನ ವ್ಯವಸ್ಥೆಯನ್ನು ಸರಿಪಡಿಸಿಕೊಳ್ಳಬೇಕಿದೆ ಎಂದು ಅವರು ಹೇಳಿದರು.
ಇಂತಹ ಬೆಳವಣಿಗೆಗಳು ಯಾವುದೇ ಸರ್ಕಾರಕ್ಕೂ ಒಳ್ಳೆಯದಲ್ಲ. ಇತರೆ ರಾಜ್ಯಗಳಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಮಾದರಿಗಳನ್ನು ಪರಿಶೀಲಿಸಿ, ಕರ್ನಾಟಕದಲ್ಲಿಯೂ ಸೂಕ್ತ ಸುಧಾರಣಾ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಗೃಹ ಸಚಿವರು ತಿಳಿಸಿದರು.

