Home Blog

ರಷ್ಯಾ ಮೇಲೆ ಉಕ್ರೇನ್ ಭೀಕರ ಡ್ರೋನ್ ದಾಳಿ: ಮಗು ಸೇರಿ 13 ಮಂದಿ ಸಾವು, ಹಲವರಿಗೆ ಗಾಯ

0

ಮಾಸ್ಕೋ: ರಷ್ಯಾದ ಟಾಟರ್ಸ್ತಾನ್ ಪ್ರದೇಶದ ಮೇಲೆ ಉಕ್ರೇನ್ ನಡೆಸಿದ ಭೀಕರ ಡ್ರೋನ್ ದಾಳಿಯಲ್ಲಿ ಮಗು ಸೇರಿದಂತೆ 13 ಮಂದಿ ಮೃತಪಟ್ಟಿದ್ದು, 75 ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ರಷ್ಯಾ-ಉಕ್ರೇನ್ ಯುದ್ಧ ಆರಂಭವಾದ ಬಳಿಕ ಉಕ್ರೇನ್ ನಡೆಸಿದ ಅತ್ಯಂತ ಭೀಕರ ದಾಳಿಗಳಲ್ಲಿ ಇದು ಒಂದಾಗಿದೆ ಎಂದು ಹೇಳಲಾಗಿದೆ.

ಮಧ್ಯ ರಷ್ಯಾದ ಟಾಟರ್ಸ್ತಾನ್ ಪ್ರದೇಶವನ್ನು ಗುರಿಯಾಗಿಸಿಕೊಂಡು ಈ ದಾಳಿ ನಡೆದಿದೆ. ದಾಳಿಯ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಘಟನಾ ಸ್ಥಳದಿಂದ ಮುಗಿಲೆತ್ತರಕ್ಕೆ ದಟ್ಟ ಹೊಗೆ ಏಳುತ್ತಿರುವುದು ವಿಡಿಯೋಗಳಲ್ಲಿ ಕಂಡುಬಂದಿದೆ.

ಉಕ್ರೇನ್ ಕೂಡ ದಾಳಿಯನ್ನು ದೃಢಪಡಿಸಿದ್ದು, ತನ್ನ ಗಡಿಯಿಂದ 1,000 ಕಿಲೋಮೀಟರ್‌ಗೂ ಹೆಚ್ಚು ದೂರದಲ್ಲಿರುವ ಕೈಗಾರಿಕಾ ನಗರ ನಿಜ್ನೆಕಾಮ್ಸ್ಕ್‌ನಲ್ಲಿರುವ ತೈಲ ಸಂಸ್ಕರಣಾಗಾರವನ್ನು ಗುರಿಯಾಗಿಸಿಕೊಂಡು ಡ್ರೋನ್ ದಾಳಿ ನಡೆಸಲಾಗಿದೆ ಎಂದು ತಿಳಿಸಿದೆ.

ರಷ್ಯಾದ ಮಿಲಿಟರಿ ಸಾಮರ್ಥ್ಯವನ್ನು ಕುಗ್ಗಿಸುವ ಉದ್ದೇಶದಿಂದ ತೈಲ ಘಟಕಗಳನ್ನು ನಿಯಂತ್ರಿಸುವ ಟನೆಕೊ ಸಂಸ್ಕರಣಾಗಾರವನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲಾಗಿದೆ ಎಂದು ಉಕ್ರೇನ್‌ನ ಜನರಲ್ ಸ್ಟಾಫ್ ಹೇಳಿದೆ ಎಂದು ವರದಿಯಾಗಿದೆ.

ರಷ್ಯಾದ ತನಿಖಾ ಸಮಿತಿ, ಉಕ್ರೇನ್ ನಡೆಸಿದ ದಾಳಿಯಲ್ಲಿ ಮೃತಪಟ್ಟವರಲ್ಲಿ ಒಂದು ಮಗು ಕೂಡ ಸೇರಿದೆ ಎಂದು ತಿಳಿಸಿದೆ. ಇದೇ ವೇಳೆ, ರಾತ್ರಿಯಿಡೀ ನಡೆದ ಕಾರ್ಯಾಚರಣೆಯಲ್ಲಿ ಒಟ್ಟು 465 ಉಕ್ರೇನ್ ಡ್ರೋನ್‌ಗಳನ್ನು ಹೊಡೆದುರುಳಿಸಿರುವುದಾಗಿ ರಷ್ಯಾ ಹೇಳಿಕೊಂಡಿದೆ.

ಈ ವರ್ಷ ರಷ್ಯಾ ಮತ್ತು ಉಕ್ರೇನ್ ಎರಡೂ ಪರಸ್ಪರ ದಾಳಿಗಳನ್ನು ಗಣನೀಯವಾಗಿ ಹೆಚ್ಚಿಸಿವೆ. ಇದರ ಪರಿಣಾಮವಾಗಿ ನಾಗರಿಕರ ಸಾವು-ನೋವು ಹೆಚ್ಚಾಗುತ್ತಿರುವ ಬಗ್ಗೆ ವಿಶ್ವಸಂಸ್ಥೆ ಆತಂಕ ವ್ಯಕ್ತಪಡಿಸಿದೆ.

ಇದೇ ವೇಳೆ, ಸೋಮವಾರ ರಷ್ಯಾ ಕೂಡ ಉಕ್ರೇನ್ ಮೇಲೆ ಮಾರಕ ದಾಳಿ ನಡೆಸಿದೆ. ಈಶಾನ್ಯ ಉಕ್ರೇನ್‌ನ ಖಾರ್ಕಿವ್ ಪ್ರದೇಶದ ಗ್ರಾಮವೊಂದರ ಮೇಲೆ ರಷ್ಯಾ ನಡೆಸಿದ ದಾಳಿಯಲ್ಲಿ ಐವರು ಮೃತಪಟ್ಟಿದ್ದಾರೆ ಎಂದು ಸ್ಥಳೀಯ ಉಕ್ರೇನಿಯನ್ ಅಧಿಕಾರಿಗಳು ತಿಳಿಸಿದ್ದಾರೆ.

ಕಳೆದ ಎರಡು ತಿಂಗಳ ಅವಧಿಯಲ್ಲಿ ಉಕ್ರೇನ್‌ನ ರಾಜಧಾನಿ ಕೈವ್‌ನಲ್ಲಿರುವ ಅಪಾರ್ಟ್‌ಮೆಂಟ್ ಕಟ್ಟಡಗಳನ್ನು ಗುರಿಯಾಗಿಸಿಕೊಂಡು ನಡೆದ ದಾಳಿಗಳಲ್ಲೂ ಹಲವಾರು ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ರಷ್ಯಾ-ಉಕ್ರೇನ್ ನಡುವಿನ ಯುದ್ಧ ಮುಂದುವರಿದಿರುವ ಬೆನ್ನಲ್ಲೇ ಎರಡೂ ದೇಶಗಳು ದಾಳಿಗಳ ತೀವ್ರತೆಯನ್ನು ಹೆಚ್ಚಿಸಿರುವುದು ನಾಗರಿಕರ ಸುರಕ್ಷತೆ ಕುರಿತು ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ.

ವಿರಾಟ್ ಕೊಹ್ಲಿ ಇಲ್ಲದೆ 16 ವರ್ಷಗಳ ಬಳಿಕ ಶ್ರೀಲಂಕಾ ಪ್ರವಾಸ: ಮೊದಲ ಟೆಸ್ಟ್ ಗೆದ್ದು ಪ್ರಾಬಲ್ಯ ಮುಂದುವರಿಸಲು ಟೀಂ ಇಂಡಿಯಾ ಸಜ್ಜು

0

ಭಾರತ ಹಾಗೂ ಶ್ರೀಲಂಕಾ ನಡುವಿನ ಎರಡು ಪಂದ್ಯಗಳ ಟೆಸ್ಟ್ ಸರಣಿ ಆಗಸ್ಟ್ 15ರಿಂದ ಆರಂಭವಾಗಲಿದೆ. ಸರಣಿ ಆರಂಭಕ್ಕೂ ಮುನ್ನ ನಡೆದ ಅಭ್ಯಾಸ ಪಂದ್ಯದಲ್ಲಿ ಟೀಂ ಇಂಡಿಯಾ ಭರ್ಜರಿ ಗೆಲುವು ದಾಖಲಿಸಿದ್ದು, ಇದೀಗ ಮೊದಲ ಟೆಸ್ಟ್ ಪಂದ್ಯವನ್ನು ಗೆದ್ದು ಸರಣಿಗೆ ಉತ್ತಮ ಆರಂಭ ನೀಡುವ ಉತ್ಸಾಹದಲ್ಲಿದೆ.

ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ದೃಷ್ಟಿಯಿಂದ ಈ ಸರಣಿ ಭಾರತಕ್ಕೆ ಅತ್ಯಂತ ಮಹತ್ವದ್ದಾಗಿದೆ. ಹೀಗಾಗಿ ಶ್ರೀಲಂಕಾ ವಿರುದ್ಧದ ಎರಡು ಟೆಸ್ಟ್ ಪಂದ್ಯಗಳಲ್ಲೂ ಉತ್ತಮ ಪ್ರದರ್ಶನ ನೀಡಿ ಸರಣಿ ಗೆಲ್ಲುವ ಗುರಿಯನ್ನು ಟೀಂ ಇಂಡಿಯಾ ಹೊಂದಿದೆ.

ಬರೋಬ್ಬರಿ ಒಂಬತ್ತು ವರ್ಷಗಳ ಬಳಿಕ ಶ್ರೀಲಂಕಾ ಪ್ರವಾಸ ಕೈಗೊಂಡಿರುವ ಭಾರತ ತಂಡದಲ್ಲಿ ಹಿಂದಿನ ಪ್ರವಾಸಕ್ಕೆ ಹೋಲಿಸಿದರೆ ಸಾಕಷ್ಟು ಬದಲಾವಣೆಗಳಾಗಿವೆ. ಈ ಪೈಕಿ ಪ್ರಮುಖ ಬದಲಾವಣೆಯೆಂದರೆ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ತಂಡದಲ್ಲಿ ಇಲ್ಲದಿರುವುದು.

ಕಳೆದ 16 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ವಿರಾಟ್ ಕೊಹ್ಲಿ ಇಲ್ಲದೆ ಭಾರತ ತಂಡ ಶ್ರೀಲಂಕಾದಲ್ಲಿ ಟೆಸ್ಟ್ ಸರಣಿಯನ್ನು ಆಡುತ್ತಿದೆ. ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್‌ಗೆ ಪದಾರ್ಪಣೆ ಮಾಡದಿದ್ದ 2010ರಲ್ಲಿ ಭಾರತ ತಂಡ ಕೊನೆಯ ಬಾರಿಗೆ ಕೊಹ್ಲಿ ಇಲ್ಲದೆ ಶ್ರೀಲಂಕಾದಲ್ಲಿ ಟೆಸ್ಟ್ ಸರಣಿ ಆಡಿತ್ತು. ಇದಾದ ಬಳಿಕ ಭಾರತ ತಂಡ ಶ್ರೀಲಂಕಾಕ್ಕೆ ಟೆಸ್ಟ್ ಸರಣಿಗಾಗಿ ಪ್ರವಾಸ ಕೈಗೊಂಡಾಗಲೆಲ್ಲಾ ಕೊಹ್ಲಿ ತಂಡದ ಭಾಗವಾಗಿದ್ದರು. ಹಲವು ಸಂದರ್ಭಗಳಲ್ಲಿ ಅವರು ತಂಡದ ನಾಯಕತ್ವವನ್ನೂ ವಹಿಸಿದ್ದರು.

ಕೊಹ್ಲಿ ನಾಯಕತ್ವದ ಅವಧಿಯಲ್ಲಿ ಶ್ರೀಲಂಕಾ ನೆಲದಲ್ಲಿ ಭಾರತ ತಂಡ ಅಮೋಘ ಪ್ರದರ್ಶನ ನೀಡಿತ್ತು. 2015ರಲ್ಲಿ ಭಾರತ ತಂಡವು ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಯನ್ನು 2-1 ಅಂತರದಲ್ಲಿ ಗೆದ್ದುಕೊಂಡಿತ್ತು. ಇದಾದ ಎರಡು ವರ್ಷಗಳ ಬಳಿಕ, 2017ರಲ್ಲಿ ಶ್ರೀಲಂಕಾವನ್ನು 3-0 ಅಂತರದಲ್ಲಿ ವೈಟ್‌ವಾಶ್ ಮಾಡುವ ಮೂಲಕ ಐತಿಹಾಸಿಕ ಸಾಧನೆ ಮಾಡಿತ್ತು.

ಇನ್ನು ಶ್ರೀಲಂಕಾ ತಂಡದ ದಾಖಲೆಯನ್ನು ಗಮನಿಸಿದರೆ, 2008ರಲ್ಲಿ ತವರಿನಲ್ಲೇ ಭಾರತವನ್ನು ಕೊನೆಯ ಬಾರಿಗೆ ಟೆಸ್ಟ್ ಸರಣಿಯಲ್ಲಿ ಮಣಿಸಿತ್ತು. ಇದೀಗ ಕೊಹ್ಲಿ ಅನುಪಸ್ಥಿತಿಯಲ್ಲಿ ಭಾರತ ತಂಡ ಶ್ರೀಲಂಕಾ ನೆಲದಲ್ಲಿ ತನ್ನ ಪ್ರಾಬಲ್ಯವನ್ನು ಮುಂದುವರಿಸಲಿದೆಯೇ ಎಂಬುದು ಕುತೂಹಲ ಮೂಡಿಸಿದೆ.

ಆಗಸ್ಟ್ 15ರಿಂದ ಆರಂಭವಾಗಲಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ಗೆಲುವಿನೊಂದಿಗೆ ಸರಣಿಗೆ ಚಾಲನೆ ನೀಡುವ ಗುರಿ ಹೊಂದಿದೆ. ಕೊಹ್ಲಿ ಇಲ್ಲದ ಹೊಸ ತಂಡವು ಶ್ರೀಲಂಕಾದಲ್ಲಿ ತನ್ನ ಸಾಮರ್ಥ್ಯವನ್ನು ಹೇಗೆ ಪ್ರದರ್ಶಿಸಲಿದೆ ಎಂಬುದನ್ನು ಕಾದುನೋಡಬೇಕಿದೆ.

ಅಭಿಷೇಕ್ ಬ್ಯಾನರ್ಜಿಗೆ ಸುಪ್ರೀಂ ಬಿಗ್ ರಿಲೀಫ್: ಕಣ್ಣಿನ ಚಿಕಿತ್ಸೆಗಾಗಿ ಮೂರು ವಾರ ವಿದೇಶಕ್ಕೆ ತೆರಳಲು ಅನುಮತಿ

0

ನವದೆಹಲಿ: ತೃಣಮೂಲ ಕಾಂಗ್ರೆಸ್ (TMC) ಸಂಸದ ಹಾಗೂ ಪಕ್ಷದ ನಾಯಕ ಅಭಿಷೇಕ್ ಬ್ಯಾನರ್ಜಿಗೆ ಕಣ್ಣಿನ ಚಿಕಿತ್ಸೆಗಾಗಿ ಮೂರು ವಾರಗಳ ಕಾಲ ವಿದೇಶಕ್ಕೆ ತೆರಳಲು ಸುಪ್ರೀಂ ಕೋರ್ಟ್ ಸೋಮವಾರ ಅನುಮತಿ ನೀಡಿದೆ. ವಿದೇಶ ಪ್ರಯಾಣಕ್ಕೆ ಅನುಮತಿ ನೀಡಲು ನಿರಾಕರಿಸಿದ್ದ ಕಲ್ಕತ್ತಾ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಅಭಿಷೇಕ್ ಬ್ಯಾನರ್ಜಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಈ ಮಹತ್ವದ ಆದೇಶ ನೀಡಿದೆ.

ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್, ನ್ಯಾಯಮೂರ್ತಿ ಜೊಯ್ಮಾಲ್ಯ ಬಾಗ್ಚಿ ಹಾಗೂ ನ್ಯಾಯಮೂರ್ತಿ ವಿ. ಮೋಹನಾ ಅವರನ್ನೊಳಗೊಂಡ ಪೀಠವು ಅರ್ಜಿಯ ವಿಚಾರಣೆ ನಡೆಸಿತು. ಅಭಿಷೇಕ್ ಬ್ಯಾನರ್ಜಿ ಅವರು ತಮ್ಮ ರಾಜತಾಂತ್ರಿಕ ಪಾಸ್‌ಪೋರ್ಟ್ ಮೂಲಕವೇ ವಿದೇಶಕ್ಕೆ ಪ್ರಯಾಣಿಸಬೇಕು ಎಂದು ಸುಪ್ರೀಂ ಕೋರ್ಟ್ ಷರತ್ತು ವಿಧಿಸಿದೆ.

ಅಲ್ಲದೆ, ವಿದೇಶ ಪ್ರವಾಸದ ಸಂಪೂರ್ಣ ವೇಳಾಪಟ್ಟಿ ಹಾಗೂ ತಂಗುವ ಸ್ಥಳದ ವಿವರಗಳನ್ನು ತನಿಖಾ ಸಂಸ್ಥೆಯೊಂದಿಗೆ ಹಂಚಿಕೊಳ್ಳಬೇಕು ಎಂದು ಪೀಠ ನಿರ್ದೇಶಿಸಿದೆ. ಆದರೆ ಈ ಮಾಹಿತಿಯನ್ನು ತನಿಖಾ ಸಂಸ್ಥೆಯು ಗೌಪ್ಯವಾಗಿ ಇಟ್ಟುಕೊಳ್ಳಬೇಕು. ಯಾವುದೇ ಕಾರಣಕ್ಕೂ ವೇಳಾಪಟ್ಟಿ ಹಾಗೂ ವಾಸ್ತವ್ಯದ ವಿವರಗಳನ್ನು ಬಹಿರಂಗಪಡಿಸಬಾರದು ಎಂದು ಕೋರ್ಟ್ ಸ್ಪಷ್ಟಪಡಿಸಿದೆ.

ವಿಚಾರಣೆ ವೇಳೆ ಕೇಂದ್ರ ಸರ್ಕಾರದ ಪರವಾಗಿ ಹಾಜರಾಗಿದ್ದ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್.ವಿ. ರಾಜು ಅವರು ಅಭಿಷೇಕ್ ಬ್ಯಾನರ್ಜಿ ಅವರ ವಿದೇಶ ಪ್ರಯಾಣಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದರು.

ಅಭಿಷೇಕ್ ಬ್ಯಾನರ್ಜಿ ವಿರುದ್ಧ 16 ಪ್ರಕರಣಗಳಿವೆ. ಅವರು ವಿದೇಶಕ್ಕೆ ತೆರಳಿದ ಬಳಿಕ ಮರಳಿ ಭಾರತಕ್ಕೆ ಬಾರದಿರುವ ಸಾಧ್ಯತೆಯಿದೆ ಎಂದು ಅವರು ವಾದಿಸಿದರು. ಅಲ್ಲದೆ, ವಿದೇಶದಲ್ಲಿ ಚಿಕಿತ್ಸೆ ಪಡೆಯುವ ಅಗತ್ಯವಿದೆಯೇ ಎಂಬುದನ್ನು ಸರ್ಕಾರಿ ವೈದ್ಯಕೀಯ ಮಂಡಳಿ ಪರಿಶೀಲಿಸಬೇಕು ಎಂದು ಮನವಿ ಮಾಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ ಜೊಯ್ಮಾಲ್ಯ ಬಾಗ್ಚಿ, ಪ್ರತಿಯೊಬ್ಬ ವ್ಯಕ್ತಿಗೂ ವಿದೇಶಕ್ಕೆ ತೆರಳುವ ಹಾಗೂ ತನಗೆ ಅಗತ್ಯವಿರುವ ವೈದ್ಯಕೀಯ ಚಿಕಿತ್ಸೆಯನ್ನು ಆಯ್ಕೆ ಮಾಡಿಕೊಳ್ಳುವ ಹಕ್ಕಿದೆ ಎಂದು ಅಭಿಪ್ರಾಯಪಟ್ಟರು. ಈ ಪ್ರಕರಣವು ಚುನಾವಣಾ ಭಾಷಣಕ್ಕೆ ಸಂಬಂಧಿಸಿದ್ದಾಗಿದೆ ಎಂಬುದನ್ನೂ ಪೀಠ ಉಲ್ಲೇಖಿಸಿತು.

ಅಭಿಷೇಕ್ ಬ್ಯಾನರ್ಜಿ ಪರ ಹಿರಿಯ ವಕೀಲ ಗೋಪಾಲ್ ಶಂಕರನಾರಾಯಣನ್ ವಾದ ಮಂಡಿಸಿದರು. ಅಭಿಷೇಕ್ ಬ್ಯಾನರ್ಜಿ ಲೋಕಸಭಾ ಸಂಸದರಾಗಿದ್ದು, ಪ್ರಮುಖ ರಾಜಕೀಯ ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿದ್ದಾರೆ. ಅವರ ಕುಟುಂಬ ಭಾರತದಲ್ಲೇ ಇರುವುದರಿಂದ ಅವರು ತಲೆಮರೆಸಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ವಾದಿಸಿದರು.

ಅಲ್ಲದೆ, ಅವರು ರಾಜತಾಂತ್ರಿಕ ಪಾಸ್‌ಪೋರ್ಟ್‌ನಲ್ಲಿ ಪ್ರಯಾಣಿಸುವುದರಿಂದ ಸಂಬಂಧಿತ ರಾಯಭಾರ ಕಚೇರಿಗಳು ಅವರ ಚಲನವಲನಗಳನ್ನು ಸುಲಭವಾಗಿ ಮೇಲ್ವಿಚಾರಣೆ ಮಾಡಬಹುದು ಎಂದು ನ್ಯಾಯಾಲಯಕ್ಕೆ ತಿಳಿಸಿದರು.

ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧನದಿಂದ ತಡೆ ನೀಡುವ ಸಂದರ್ಭದಲ್ಲಿ ಕಲ್ಕತ್ತಾ ಹೈಕೋರ್ಟ್ ಅಭಿಷೇಕ್ ಬ್ಯಾನರ್ಜಿ ಅವರ ವಿದೇಶ ಪ್ರಯಾಣಕ್ಕೆ ನಿರ್ಬಂಧ ವಿಧಿಸಿತ್ತು.

ಅಮೆರಿಕದಲ್ಲಿ ಈ ಹಿಂದೆ ತಮ್ಮ ಶಸ್ತ್ರಚಿಕಿತ್ಸೆ ನಡೆಸಿದ್ದ ತಜ್ಞ ವೈದ್ಯರ ಬಳಿಯೇ ಮುಂದಿನ ಚಿಕಿತ್ಸೆಯನ್ನು ಪಡೆಯಲು ಅವಕಾಶ ನೀಡುವಂತೆ ಅಭಿಷೇಕ್ ಬ್ಯಾನರ್ಜಿ ಹೈಕೋರ್ಟ್‌ಗೆ ಮನವಿ ಮಾಡಿದ್ದರು. ಆದರೆ ಹೈಕೋರ್ಟ್, ಸರ್ಕಾರಿ ಎಸ್‌ಎಸ್‌ಕೆಎಂ ಆಸ್ಪತ್ರೆಯ ವೈದ್ಯಕೀಯ ಮಂಡಳಿ ಮುಂದೆ ಹಾಜರಾಗುವಂತೆ ಸೂಚಿಸಿ, ಆಗಸ್ಟ್ 5ರಂದು ಅವರ ಅರ್ಜಿಯನ್ನು ವಜಾಗೊಳಿಸಿತ್ತು.

ಈ ಆದೇಶವನ್ನು ಪ್ರಶ್ನಿಸಿ ಅಭಿಷೇಕ್ ಬ್ಯಾನರ್ಜಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಇದೀಗ ಸುಪ್ರೀಂ ಕೋರ್ಟ್ ಮೂರು ವಾರಗಳ ಕಾಲ ವಿದೇಶಕ್ಕೆ ತೆರಳಿ ಚಿಕಿತ್ಸೆ ಪಡೆಯಲು ಅನುಮತಿ ನೀಡಿದ್ದು, ಷರತ್ತುಗಳೊಂದಿಗೆ ಅಭಿಷೇಕ್ ಬ್ಯಾನರ್ಜಿಗೆ ರಿಲೀಫ್ ದೊರೆತಿದೆ.

ಬಿಡದಿ ಪಾದಯಾತ್ರೆ ರಾಜಕೀಯಕ್ಕಾಗಿ ನಡೆಯುತ್ತಿದೆ: CM ಸ್ಪಷ್ಟನೆ ನೀಡಿದ ಬಳಿಕವೂ ಹೋರಾಟ ಸರಿಯಲ್ಲ ಎಂದ ಮಧು ಬಂಗಾರಪ್ಪ

0

ಬೆಂಗಳೂರು: ಬಿಡದಿ ಟೌನ್‌ಶಿಪ್ ವಿಚಾರವಾಗಿ ಜೆಡಿಎಸ್ ನಡೆಸುತ್ತಿರುವ ಪಾದಯಾತ್ರೆ ರಾಜಕೀಯ ಉದ್ದೇಶದಿಂದ ಕೂಡಿದೆ ಎಂದು ಸಚಿವ ಮಧು ಬಂಗಾರಪ್ಪ ಆರೋಪಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಪಾದಯಾತ್ರೆ ನಡೆಸುವುದು ಜೆಡಿಎಸ್‌ನ ಹಕ್ಕು. ಹೀಗಾಗಿ ಅವರು ಬಿಡದಿ ಪಾದಯಾತ್ರೆ ನಡೆಸುತ್ತಿದ್ದಾರೆ. ಆದರೆ ಮುಖ್ಯಮಂತ್ರಿ ಈಗಾಗಲೇ ಈ ವಿಚಾರದಲ್ಲಿ ಸ್ಪಷ್ಟನೆ ನೀಡಿದ್ದಾರೆ. ಯಾವುದೇ ತೊಂದರೆ ನೀಡುವುದಿಲ್ಲ ಹಾಗೂ ಒತ್ತಾಯಪೂರ್ವಕವಾಗಿ ಭೂಮಿ ಸ್ವಾಧೀನಪಡಿಸಿಕೊಳ್ಳುವುದಿಲ್ಲ ಎಂದು ಸಿಎಂ ಹೇಳಿದ್ದಾರೆ. ಹೀಗಿದ್ದರೂ ರಾಜಕೀಯ ಉದ್ದೇಶಕ್ಕಾಗಿ ಪಾದಯಾತ್ರೆ ನಡೆಸುವುದು ಸರಿಯಲ್ಲ ಎಂದು ಹೇಳಿದರು.

ಬಿಡದಿ ವಿಚಾರದಲ್ಲಿ ಬೇರೆ ಯಾವುದೇ ವಿಷಯವಿದ್ದರೆ ಅದನ್ನು ಸದನದಲ್ಲಿ ಚರ್ಚಿಸಲಿ. ಹಿಂದೆ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಪ್ರತಿಭಟನೆ ನಡೆಸಿದವರ ಮೇಲೆ ಲಾಠಿಚಾರ್ಜ್ ಮಾಡಿಸಲಾಗಿತ್ತು. ಆದರೆ ಈಗ ಪಾದಯಾತ್ರೆ ಮಾಡಬೇಡಿ ಎಂದು ನಾವು ಹೇಳುತ್ತಿಲ್ಲ. ಹೋರಾಟ ನಡೆಸುವ ಹಕ್ಕು ಅವರಿಗಿದೆ. ಆದರೆ ಸಿಎಂ ಈಗಾಗಲೇ ಸ್ಪಷ್ಟವಾಗಿ ಹೇಳಿರುವ ಹಿನ್ನೆಲೆಯಲ್ಲಿ ರಾಜಕೀಯಕ್ಕಾಗಿ ಪಾದಯಾತ್ರೆ ನಡೆಸುವುದು ಸೂಕ್ತವಲ್ಲ ಎಂದು ಮಧು ಬಂಗಾರಪ್ಪ ತಿಳಿಸಿದರು.

ಖಾತೆ ಹಂಚಿಕೆ ಬಗ್ಗೆ ಇನ್ನೂ ಸೂಚನೆ ಬಂದಿಲ್ಲ

ಸಚಿವರಿಗೆ ಖಾತೆ ಹಂಚಿಕೆ ವಿಚಾರವಾಗಿ ಇದುವರೆಗೆ ಯಾವುದೇ ಹೊಸ ಸೂಚನೆ ಬಂದಿಲ್ಲ ಎಂದು ಮಧು ಬಂಗಾರಪ್ಪ ಹೇಳಿದರು. ಈಗಾಗಲೇ ಸಚಿವರಿಗೆ ಸಾಕಷ್ಟು ಜವಾಬ್ದಾರಿ ನೀಡಲಾಗಿದೆ. ಬರ ಹಾಗೂ ಅತಿವೃಷ್ಟಿ ಪರಿಸ್ಥಿತಿಯ ಪರಿಶೀಲನೆಯ ಜವಾಬ್ದಾರಿಯನ್ನೂ ನೀಡಲಾಗಿತ್ತು. ತಾವು ಮೂರು ದಿನಗಳ ಕಾಲ ವಿವಿಧ ಪ್ರದೇಶಗಳಿಗೆ ತೆರಳಿ ಪರಿಶೀಲನೆ ನಡೆಸಿದ್ದು, ಜಿಲ್ಲಾಧಿಕಾರಿಗಳು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಪರಿಸ್ಥಿತಿಯ ಅವಲೋಕನ ಮಾಡಿರುವುದಾಗಿ ತಿಳಿಸಿದರು.

ಕೆಲವು ಪ್ರದೇಶಗಳಲ್ಲಿ ಮೂರು ಮಂದಿ ಮೃತಪಟ್ಟಿರುವ ಘಟನೆಗಳೂ ನಡೆದಿದ್ದು, ಸ್ಥಳಕ್ಕೆ ತೆರಳಿ ಪರಿಸ್ಥಿತಿಯನ್ನು ಪರಿಶೀಲಿಸಿ ಬಂದಿದ್ದೇನೆ ಎಂದು ಸಚಿವರು ಹೇಳಿದರು.

ಈಗಾಗಲೇ 13 ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಉಳಿದ ಸಚಿವರಿಗೆ ಖಾತೆ ಹಂಚಿಕೆ ಮಾಡಬೇಕಿದೆ. ಮುಖ್ಯಮಂತ್ರಿ ನಿನ್ನೆ ಈ ಕುರಿತು ತಾವೇ ಎಲ್ಲವನ್ನೂ ತಿಳಿಸುವುದಾಗಿ ಹೇಳಿದ್ದಾರೆ. ದೆಹಲಿಗೆ ತೆರಳಿರುವ ಸಿಎಂ ವರಿಷ್ಠ ನಾಯಕರನ್ನು ಭೇಟಿ ಮಾಡಿ ಬಳಿಕ ಖಾತೆ ಹಂಚಿಕೆ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಮಧು ಬಂಗಾರಪ್ಪ ಹೇಳಿದರು.

ದರ್ಶನ್‌ ಸೇರಿದಂತೆ ಆರೋಪಿಗಳಿಗೆ ಕೋರ್ಟ್ ಶಾಕ್: ಪ್ರದೋಷ್ ಮಾಫಿ ಸಾಕ್ಷಿ ಅರ್ಜಿಗೆ ಆಕ್ಷೇಪ ಸಲ್ಲಿಸುವಂತಿಲ್ಲ!

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿ ಪ್ರದೋಷ್‌ ಮಾಫಿ ಸಾಕ್ಷಿಯಾಗುವ ಅರ್ಜಿ ವಿಚಾರಣೆ ಮತ್ತೊಂದು ಮಹತ್ವದ ಹಂತ ತಲುಪಿದೆ. ಪ್ರದೋಷ್‌ ಮಾಫಿ ಸಾಕ್ಷಿಯಾಗುವುದಕ್ಕೆ ಇತರ ಆರೋಪಿಗಳು ಆಕ್ಷೇಪಣೆ ಸಲ್ಲಿಸಲು ಅವಕಾಶವಿಲ್ಲ ಎಂದು ಸೆಷನ್ಸ್‌ ಕೋರ್ಟ್‌ ಸ್ಪಷ್ಟಪಡಿಸಿದೆ. ದರ್ಶನ್‌ ಸೇರಿದಂತೆ ಇತರ ಆರೋಪಿಗಳ ಪರ ವಕೀಲರು ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡುವಂತೆ ವಾದಿಸಿದ್ದರೂ ಕೋರ್ಟ್‌ ಅದನ್ನು ಪರಿಗಣಿಸಿಲ್ಲ.

ಪ್ರಕರಣದ ಆರೋಪಿಗಳು ವೀಡಿಯೋ ಕಾನ್ಫರೆನ್ಸ್‌ ಮೂಲಕ ವಿಚಾರಣೆಗೆ ಹಾಜರಾದರು. ದರ್ಶನ್‌, ಪ್ರದೋಷ್‌, ನಾಗರಾಜ್‌, ಲಕ್ಷ್ಮಣ್‌ ಹಾಗೂ ಜಗದೀಶ್‌ ವೀಡಿಯೋ ಕಾನ್ಫರೆನ್ಸ್‌ ಮೂಲಕ ಕೋರ್ಟ್‌ ಮುಂದೆ ಹಾಜರಾದರು. ಪವಿತ್ರಾಗೌಡ ಕೂಡ ವೀಡಿಯೋ ಕಾನ್ಫರೆನ್ಸ್‌ ಮೂಲಕ ವಿಚಾರಣೆಗೆ ಹಾಜರಾದರು.

ಪ್ರದೋಷ್‌ ಮಾಫಿ ಸಾಕ್ಷಿ ಅರ್ಜಿಗೆ ಆರೋಪಿಗಳ ಪರ ವಕೀಲರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು. ‘ಮಾಫಿ ಸಾಕ್ಷಿ ಅರ್ಜಿಗೆ ನಮ್ಮ ಆಕ್ಷೇಪಣೆ ಇದೆ. ನಮ್ಮ ವಾದವನ್ನೂ ಕೇಳಬೇಕು’ ಎಂದು ವಕೀಲರು ವಾದಿಸಿದ್ದರು.

ಆದರೆ ಕೋರ್ಟ್‌ ಆರೋಪಿಗಳ ಆಕ್ಷೇಪಣೆಗೆ ಅವಕಾಶವಿಲ್ಲ ಎಂದು ಆದೇಶಿಸಿದೆ. ಪ್ರದೋಷ್‌ ಮಾಫಿ ಸಾಕ್ಷಿಯಾಗುವ ಅರ್ಜಿಗೆ ಇತರ ಆರೋಪಿಗಳು ಆಕ್ಷೇಪಣೆ ಸಲ್ಲಿಸಲು ಸಾಧ್ಯವಿಲ್ಲ ಎಂದು ಕೋರ್ಟ್‌ ಸ್ಪಷ್ಟಪಡಿಸಿದೆ. ಈ ಆದೇಶ ದರ್ಶನ್‌ ಸೇರಿದಂತೆ ಇತರ ಆರೋಪಿಗಳ ಪರ ವಕೀಲರಿಗೆ ಹಿನ್ನಡೆಯಾಗಿ ಪರಿಣಮಿಸಿದೆ.

ಇದರ ನಡುವೆ ಪ್ರದೋಷ್‌ ಮಾಫಿ ಸಾಕ್ಷಿ ಅರ್ಜಿಯನ್ನು ಕೋರ್ಟ್‌ ಪರಿಗಣಿಸುತ್ತದೆಯೇ ಎಂಬುದು ಇನ್ನೂ ಪ್ರತ್ಯೇಕ ಆದೇಶದ ಮೂಲಕ ನಿರ್ಧಾರವಾಗಲಿದೆ. ನ್ಯಾಯಮೂರ್ತಿ ಸುಜಾತಾ ಎಂ. ಸಾಂಬ್ರಾಣಿ ಅವರು ಈ ಕುರಿತು ಪ್ರತ್ಯೇಕ ಆದೇಶ ನೀಡಲಿದ್ದಾರೆ.

ಮಧ್ಯಾಹ್ನ 3 ಗಂಟೆಗೆ ಆದೇಶ ನಿರೀಕ್ಷಿಸಲಾಗಿತ್ತು. ಪ್ರಕರಣದ ವಿಚಾರಣೆ ಹಿನ್ನೆಲೆಯಲ್ಲಿ ದರ್ಶನ್‌ ಪರ ವಕೀಲ ಹಸ್ಮತ್‌ ಪಾಷ ಕೋರ್ಟ್‌ ಹಾಲ್‌ಗೆ ಆಗಮಿಸಿದ್ದರು.

ಪ್ರದೋಷ್‌ ಮಾಫಿ ಸಾಕ್ಷಿ ಅರ್ಜಿಗೆ ಇತರ ಆರೋಪಿಗಳ ಆಕ್ಷೇಪಣೆಗೆ ಅವಕಾಶವಿಲ್ಲ ಎಂಬ ಕೋರ್ಟ್‌ ಆದೇಶ ಇದೀಗ ಪ್ರಕರಣದ ಮುಂದಿನ ಕಾನೂನು ಪ್ರಕ್ರಿಯೆಯಲ್ಲಿ ಮಹತ್ವದ ಬೆಳವಣಿಗೆಯಾಗಿದೆ.

ಬಿಡದಿ ರೈತರ ಹೋರಾಟಕ್ಕೆ ಬಿಜೆಪಿ ಸಂಪೂರ್ಣ ಬೆಂಬಲ; ರೈತರ ಜಮೀನು ರಕ್ಷಣೆಯಲ್ಲಿ ಯಾವುದೇ ಗೊಂದಲವಿಲ್ಲ ಎಂದ ಬಿ.ವೈ. ವಿಜಯೇಂದ್ರ

0

ಬೆಂಗಳೂರು: ಬಿಡದಿ ರೈತರ ಜಮೀನು ಹಾಗೂ ರೈತರ ಹಿತರಕ್ಷಣೆಯ ವಿಚಾರದಲ್ಲಿ ಬಿಜೆಪಿಗೆ ಯಾವುದೇ ಗೊಂದಲವಿಲ್ಲ. ಬಿಜೆಪಿ ಮತ್ತು ಜೆಡಿಎಸ್ ಎರಡೂ ರೈತರ ಪರವಾಗಿ ಹೋರಾಟ ನಡೆಸುತ್ತಿದ್ದು, ರೈತರ ಹಿತರಕ್ಷಣೆಯೇ ಎರಡೂ ಪಕ್ಷಗಳ ಸಾಮಾನ್ಯ ಉದ್ದೇಶವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸ್ಪಷ್ಟಪಡಿಸಿದ್ದಾರೆ.

ಬಿಡದಿ ಪಾದಯಾತ್ರೆ ವಿಚಾರದಲ್ಲಿ ಯಾರೂ ಗೊಂದಲಕ್ಕೀಡಾಗುವ ಅಗತ್ಯವಿಲ್ಲ ಎಂದು ಹೇಳಿದ ವಿಜಯೇಂದ್ರ, ಜೆಡಿಎಸ್ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರೊಂದಿಗೆ ಕಳೆದ ವಾರ ದೂರವಾಣಿ ಮೂಲಕ ಮಾತನಾಡಿದ್ದಾಗಿ ತಿಳಿಸಿದರು.

ಬಿಜೆಪಿಯೂ ರೈತರ ಪರವಾಗಿದ್ದು, ಬಿಜೆಪಿ-ಜೆಡಿಎಸ್ ಎರಡೂ ಪಕ್ಷಗಳು ಒಟ್ಟಾಗಿ ಪಾದಯಾತ್ರೆ ನಡೆಸುವ ಕುರಿತು ಚರ್ಚೆ ನಡೆಸಿದ್ದೆ. ಇದಕ್ಕೆ ಕುಮಾರಸ್ವಾಮಿ ಅವರೂ ಸಕಾರಾತ್ಮಕವಾಗಿ ಸ್ಪಂದಿಸಿದ್ದರು ಎಂದು ವಿಜಯೇಂದ್ರ ಹೇಳಿದರು.

ನಂತರ ಜೆಡಿಎಸ್ ವತಿಯಿಂದ ಪಾದಯಾತ್ರೆಯ ದಿನಾಂಕ ಘೋಷಿಸಲಾಯಿತು. ಈ ಹಿನ್ನೆಲೆಯಲ್ಲಿ ಬಿಜೆಪಿ ಹಿರಿಯ ನಾಯಕರೊಂದಿಗೆ ಚರ್ಚಿಸಿ ಯಾವುದೇ ಕಾರಣಕ್ಕೂ ಗೊಂದಲಕ್ಕೆ ಅವಕಾಶ ನೀಡಬಾರದು ಎಂದು ನಿರ್ಧರಿಸಲಾಯಿತು. ಜೆಡಿಎಸ್ ಈಗಾಗಲೇ ದಿನಾಂಕ ಪ್ರಕಟಿಸಿರುವ ಹಿನ್ನೆಲೆಯಲ್ಲಿ ಪಾದಯಾತ್ರೆಗೆ ಸಾಂಕೇತಿಕ ಬೆಂಬಲ ನೀಡುವುದು ಹಾಗೂ ಸದನದ ಒಳಗೂ ರೈತರ ಪರವಾಗಿ ಹೋರಾಟ ಮುಂದುವರಿಸುವ ನಿರ್ಧಾರ ಕೈಗೊಳ್ಳಲಾಗಿದೆ ಎಂದರು.

ತಾವು ಪಾದಯಾತ್ರೆಯಲ್ಲಿ ಭಾಗವಹಿಸದಿರುವುದಕ್ಕೆ ಯಾವುದೇ ರಾಜಕೀಯ ಕಾರಣವಿಲ್ಲ ಎಂದು ವಿಜಯೇಂದ್ರ ಸ್ಪಷ್ಟಪಡಿಸಿದರು. ಚಿಕ್ಕಬಳ್ಳಾಪುರ ಮತ್ತು ಕೋಲಾರ ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಹಲವು ಪೂರ್ವನಿಗದಿತ ಕಾರ್ಯಕ್ರಮಗಳು ಮುಂದೂಡಿಕೆಯಾಗಿದ್ದವು. ಭಾನುವಾರ ಕಾರ್ಯಕ್ರಮ ನಡೆಸಬೇಕೆಂಬ ಸ್ಥಳೀಯ ನಾಯಕರ ಒತ್ತಾಯದ ಹಿನ್ನೆಲೆಯಲ್ಲಿ ಪೂರ್ವನಿಗದಿತ ಕಾರ್ಯಕ್ರಮದಂತೆ ಕೋಲಾರ ಮತ್ತು ಚಿಕ್ಕಬಳ್ಳಾಪುರಕ್ಕೆ ತೆರಳಬೇಕಾಯಿತು ಎಂದು ಹೇಳಿದರು.

ಬಿಜೆಪಿ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಸೇರಿದಂತೆ ಪಕ್ಷದ ಮುಖಂಡರು ಸಾಂಕೇತಿಕವಾಗಿ ಪಾದಯಾತ್ರೆಗೆ ಬೆಂಬಲ ನೀಡಿದ್ದಾರೆ. ಈ ವಿಚಾರದಲ್ಲಿ ಬಿಜೆಪಿ ಒಳಗೆ ಯಾವುದೇ ಗೊಂದಲವಿಲ್ಲ. ರೈತರ ಹೋರಾಟದ ವಿಚಾರದಲ್ಲಿ ಬಿಜೆಪಿ ಸದಾ ರೈತರ ಪರವಾಗಿ ನಿಲ್ಲಲಿದೆ ಎಂದು ವಿಜಯೇಂದ್ರ ಹೇಳಿದರು.

ಬಿಡದಿಯಲ್ಲಿ ಹೋರಾಟ ನಡೆಸುತ್ತಿರುವ ರೈತರ ಮೇಲೆ ರಾಜ್ಯ ಸರ್ಕಾರ ಒತ್ತಡ ಹೇರುತ್ತಿದೆ. ಪರಿಹಾರ ನೀಡುವ ಹೆಸರಿನಲ್ಲಿ ಕೆಲವರನ್ನು ಹೋರಾಟದಿಂದ ಹಿಂದೆ ಸರಿಸುವ ಪ್ರಯತ್ನ ನಡೆಯುತ್ತಿದೆ ಎಂಬ ಮಾಹಿತಿ ತಮ್ಮ ಗಮನಕ್ಕೆ ಬಂದಿದೆ ಎಂದು ವಿಜಯೇಂದ್ರ ಆರೋಪಿಸಿದರು.

ಈ ವಿಚಾರವನ್ನು ಈಗಾಗಲೇ ಸಂಬಂಧಪಟ್ಟ ಸಚಿವರ ಗಮನಕ್ಕೂ ತರಲಾಗಿದೆ. ಆದರೆ ಇದರ ಅರ್ಥ ಬಿಜೆಪಿ ಹೋರಾಟದಿಂದ ಹಿಂದೆ ಸರಿದಿದೆ ಎಂದಲ್ಲ. ಬಿಡದಿ ಮಾತ್ರವಲ್ಲದೆ ರಾಜ್ಯದಾದ್ಯಂತ ರೈತರ ಜಮೀನುಗಳ ರಕ್ಷಣೆಯ ವಿಚಾರದಲ್ಲಿ ಬಿಜೆಪಿ ಹೋರಾಟ ಮುಂದುವರಿಸಲಿದೆ ಎಂದು ಹೇಳಿದರು. ಬಿಡದಿ, ವಿಮಾನ ನಿಲ್ದಾಣ ಸೇರಿದಂತೆ ರೈತರ ಭೂಮಿಗೆ ಸಂಬಂಧಿಸಿದ ಎಲ್ಲ ವಿಚಾರಗಳಲ್ಲೂ ಬಿಜೆಪಿ ರೈತರ ಪರವಾಗಿ ನಿಲ್ಲಲಿದೆ ಎಂದರು.

ಚಿಕ್ಕಬಳ್ಳಾಪುರ ಪ್ರವಾಸದ ವೇಳೆ ಶಿಡ್ಲಘಟ್ಟದಲ್ಲಿಯೂ ಕೆಐಎಡಿಬಿ ರೈತರ ಜಮೀನನ್ನು ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳಲು ಮುಂದಾಗಿರುವುದು ಗಮನಕ್ಕೆ ಬಂದಿದೆ. ರೈತರ ಜಮೀನು ಕಸಿದುಕೊಳ್ಳುವ ಯಾವುದೇ ಪ್ರಯತ್ನವನ್ನು ಬಿಜೆಪಿ ಸಹಿಸುವುದಿಲ್ಲ ಎಂದು ವಿಜಯೇಂದ್ರ ಎಚ್ಚರಿಸಿದರು.

‘ನನ್ನ ಸಾಧನೆಗೆಲ್ಲಾ ನನ್ನ ತಾಯಿಯೇ ಕಾರಣ’: ತಾಯಿ ಕಳೆದುಕೊಂಡ ಗುರುಕಿರಣ್‌ ಭಾವುಕ ನುಡಿ

ಕನ್ನಡದ ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್ ಅವರ ಬದುಕಿನಲ್ಲಿ ದುಃಖದ ಛಾಯೆ ಆವರಿಸಿದೆ. ಅವರ ತಾಯಿ ರತ್ನಕಾಂತಿ ಶೆಟ್ಟಿ ಅವರು ನಿಧನರಾಗಿದ್ದು, ತಾಯಿಯ ಅಗಲಿಕೆಯಿಂದ ಕಂಗಾಲಾಗಿರುವ ಗುರುಕಿರಣ್ ಸಾಮಾಜಿಕ ಜಾಲತಾಣದಲ್ಲಿ ಹೃದಯಸ್ಪರ್ಶಿ ಪೋಸ್ಟ್ ಹಂಚಿಕೊಂಡಿದ್ದಾರೆ. ತಮ್ಮ ಜೀವನದ ಪ್ರತಿಯೊಂದು ಸಾಧನೆಯ ಹಿಂದೆಯೂ ತಾಯಿಯೇ ಇದ್ದರು ಎಂದು ಹೇಳುವ ಮೂಲಕ ಗುರುಕಿರಣ್ ಮಾತೃವಂದನೆ ಸಲ್ಲಿಸಿದ್ದಾರೆ.

‘ನನ್ನ ಪ್ರೀತಿಯ ತಾಯಿ ರತ್ನಕಾಂತಿ ಶೆಟ್ಟಿ ಅವರು ನಿಧನರಾಗಿದ್ದಾರೆ ಎಂಬ ಹೃದಯವಿದ್ರಾವಕ ಸುದ್ದಿಯನ್ನು ಹಂಚಿಕೊಳ್ಳುತ್ತಿದ್ದೇನೆ. ಜೀವನದಲ್ಲಿ ಏನೇ ಆಗಿದ್ದರೂ, ಏನೇ ಸಾಧಿಸಿದ್ದರೂ ಅದಕ್ಕೆಲ್ಲಾ ನನ್ನ ತಾಯಿಯೇ ಕಾರಣ’ ಎಂದು ಗುರುಕಿರಣ್ ಬರೆದುಕೊಂಡಿದ್ದಾರೆ.

ಗುರುಕಿರಣ್ ಅವರ ಭಾವುಕ ಪೋಸ್ಟ್‌ಗೆ ಚಿತ್ರರಂಗದ ಗಣ್ಯರು, ಅಭಿಮಾನಿಗಳು ಹಾಗೂ ಆತ್ಮೀಯರಿಂದ ಸಂತಾಪದ ಮಹಾಪೂರವೇ ಹರಿದುಬಂದಿದೆ. ತಾಯಿ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಕುಟುಂಬಕ್ಕೆ ಈ ದುಃಖವನ್ನು ಭರಿಸುವ ಶಕ್ತಿ ದೊರೆಯಲಿ ಎಂದು ಎಲ್ಲರೂ ಪ್ರಾರ್ಥಿಸುತ್ತಿದ್ದಾರೆ.

90ರ ದಶಕದ ಅಂತ್ಯದಲ್ಲಿ ‘ಎ’ ಚಿತ್ರದ ಮೂಲಕ ಸ್ವತಂತ್ರ ಸಂಗೀತ ನಿರ್ದೇಶಕರಾಗಿ ಕನ್ನಡ ಚಿತ್ರರಂಗ ಪ್ರವೇಶಿಸಿದ ಗುರುಕಿರಣ್, ತಮ್ಮ ವಿಭಿನ್ನ ಸಂಗೀತದ ಮೂಲಕ ಹೊಸ ಸಂಚಲನ ಸೃಷ್ಟಿಸಿದ್ದರು. ‘ಉಪೇಂದ್ರ’, ‘ಅಪ್ಪು’, ‘ಆಪ್ತಮಿತ್ರ’, ‘ಜೋಗಿ’ ಸೇರಿದಂತೆ ಹಲವು ಯಶಸ್ವಿ ಚಿತ್ರಗಳಿಗೆ ಸಂಗೀತ ನೀಡುವ ಮೂಲಕ ಕನ್ನಡ ಚಿತ್ರರಂಗದಲ್ಲಿ ತಮ್ಮದೇ ಆದ ಸ್ಥಾನ ಗಳಿಸಿದರು.

ಸಂಗೀತ ನಿರ್ದೇಶನದ ಜೊತೆಗೆ ಗಾಯಕ ಹಾಗೂ ನಟನಾಗಿಯೂ ಗುರುಕಿರಣ್ ಗುರುತಿಸಿಕೊಂಡಿದ್ದಾರೆ. ರಾಜ್ಯ ಸರ್ಕಾರಿ ಪ್ರಶಸ್ತಿ ಹಾಗೂ ಹಲವು ಫಿಲ್ಮ್‌ಫೇರ್ ಪ್ರಶಸ್ತಿಗಳನ್ನು ಗೆದ್ದಿರುವ ಅವರ ಯಶಸ್ಸಿನ ಹಾದಿಯಲ್ಲಿ ತಾಯಿ ರತ್ನಕಾಂತಿ ಶೆಟ್ಟಿ ಅವರ ಪ್ರೋತ್ಸಾಹ ಪ್ರಮುಖ ಪಾತ್ರ ವಹಿಸಿತ್ತು.

ತಮ್ಮ ಸಾಧನೆಯ ಹಿಂದಿನ ದೊಡ್ಡ ಶಕ್ತಿಯಾಗಿದ್ದ ತಾಯಿಯನ್ನೇ ಕಳೆದುಕೊಂಡಿರುವ ಗುರುಕಿರಣ್‌ಗೆ ಇದೀಗ ಚಿತ್ರರಂಗದ ಗಣ್ಯರು, ಸ್ನೇಹಿತರು ಮತ್ತು ಅಭಿಮಾನಿಗಳು ಧೈರ್ಯ ತುಂಬುತ್ತಿದ್ದಾರೆ.

ಬಿಡದಿ ಟೌನ್ ಶಿಪ್ ಯೋಜನೆಗೆ ವಿರೋಧ: ಸದನದಲ್ಲೇ ಉತ್ತರ ನೀಡುತ್ತೇವೆ ಎಂದ ಸಚಿವ ಸಂತೋಷ್ ಲಾಡ್

0

ಬೆಂಗಳೂರು: ಬಿಡದಿ ಟೌನ್‌ಶಿಪ್ ಯೋಜನೆ ವಿಚಾರವಾಗಿ ವಿಪಕ್ಷಗಳು ವಿಧಾನಸಭೆಯಲ್ಲಿ ಚರ್ಚೆ ನಡೆಸಲಿ, ಸರ್ಕಾರ ಸೂಕ್ತ ಉತ್ತರ ನೀಡಲಿದೆ ಎಂದು ಸಚಿವ ಸಂತೋಷ್ ಲಾಡ್ ತಿಳಿಸಿದ್ದಾರೆ.

ಬಿಡದಿ ಟೌನ್‌ಶಿಪ್ ಯೋಜನೆ ವಿರೋಧಿಸಿ ಜೆಡಿಎಸ್ ಹಮ್ಮಿಕೊಂಡಿರುವ ಪಾದಯಾತ್ರೆ ಕುರಿತು ಪ್ರತಿಕ್ರಿಯಿಸಿದ ಅವರು, ಹೋರಾಟಗಳು ನಡೆಯಬೇಕು. ಜೆಡಿಎಸ್ ಪಾದಯಾತ್ರೆ ನಡೆಸಲಿ ಎಂದು ಹೇಳಿದರು.

ಬಿಡದಿ ಟೌನ್‌ಶಿಪ್ ಯೋಜನೆ ಅವರ ಕಾಲದಲ್ಲೇ ಆರಂಭವಾಗಿತ್ತು ಎಂದು ಆರೋಪಿಸಿದ ಸಚಿವರು, ಈ ಕುರಿತ ಸಂಪೂರ್ಣ ವಿಚಾರ ಸದನದಲ್ಲಿ ಚರ್ಚೆಯಾಗಲಿ ಎಂದರು.

ವಿಪಕ್ಷಗಳು ಸದನದಲ್ಲಿ ವಿಷಯವನ್ನು ಪ್ರಸ್ತಾಪಿಸಿ ಚರ್ಚೆ ನಡೆಸಲಿ. ಸರ್ಕಾರ ಕೂಡ ಸದನದಲ್ಲಿ ಎಲ್ಲವನ್ನೂ ತೆರೆದಿಡುವ ಕೆಲಸ ಮಾಡಲಿದೆ. ವಿಪಕ್ಷಗಳು ಪ್ರಶ್ನೆಗಳನ್ನು ಕೇಳಲಿ, ಅದಕ್ಕೆ ಸರ್ಕಾರ ಸದನದಲ್ಲೇ ಉತ್ತರ ನೀಡಲಿದೆ ಎಂದು ಸಂತೋಷ್ ಲಾಡ್ ತಿಳಿಸಿದರು.

ಇದೇ ವೇಳೆ ರಾಜ್ಯದಲ್ಲಿನ ಬರ ಪರಿಸ್ಥಿತಿ ಕುರಿತು ಮಾತನಾಡಿದ ಸಚಿವ ಸಂತೋಷ್ ಲಾಡ್, ಬರ ಪರಿಹಾರಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF) ನಿಯಮಗಳನ್ನು ಕೇಂದ್ರ ಸರ್ಕಾರ ಬದಲಾವಣೆ ಮಾಡಬೇಕು ಎಂದು ಆಗ್ರಹಿಸಿದರು.

ಧಾರವಾಡ ಜಿಲ್ಲೆಯಲ್ಲಿ ರೈತರು ಸಂಕಷ್ಟದಲ್ಲಿದ್ದಾರೆ. ಜಿಲ್ಲೆಯಲ್ಲಿ ಶೇ.96ರಷ್ಟು ಬಿತ್ತನೆಯಾಗಿದ್ದರೂ ನಿರೀಕ್ಷಿತ ಫಸಲು ಸಿಗುತ್ತಿಲ್ಲ. ಕೆಲವು ಪ್ರದೇಶಗಳಲ್ಲಿ ಮಳೆಯಾಗಿಲ್ಲ, ಇನ್ನೂ ಕೆಲವು ಕಡೆ ಮಳೆಯಾಗಿದೆ. ಮೇಲ್ನೋಟಕ್ಕೆ ಹೊಲಗಳಲ್ಲಿ ಹಸಿರು ಕಾಣಿಸುತ್ತಿದ್ದರೂ ವಾಸ್ತವವಾಗಿ ಬೆಳೆ ಇಲ್ಲದ ಪರಿಸ್ಥಿತಿ ಇದೆ. ಇದನ್ನು ‘ಹಸಿರು ಬರ’ ಎಂದು ಘೋಷಿಸಬಹುದಾದಂತಹ ಸ್ಥಿತಿ ನಿರ್ಮಾಣವಾಗಿದೆ ಎಂದು ಸಚಿವರು ಹೇಳಿದರು.

ಬರ ಪರಿಸ್ಥಿತಿ ಕುರಿತು ಅಧ್ಯಯನ ನಡೆಸುವಂತೆ ಮುಖ್ಯಮಂತ್ರಿ ಸೂಚನೆ ನೀಡಿದ್ದರು. ಅದರಂತೆ ಅಧ್ಯಯನ ನಡೆಸಿ ವರದಿ ಸಿದ್ಧಪಡಿಸಲಾಗಿದೆ. ಈ ವರದಿಯನ್ನು ಮುಖ್ಯಮಂತ್ರಿಗಳಿಗೆ ಸಲ್ಲಿಸಲಾಗುವುದು ಎಂದು ಸಂತೋಷ್ ಲಾಡ್ ತಿಳಿಸಿದರು.

ರಾಜ್ಯದಲ್ಲಿ ಬರ ಘೋಷಣೆ ಮಾಡಲು ನಿರ್ದಿಷ್ಟ ನಿಯಮಗಳಿವೆ. ಈ ನಿಯಮಗಳ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ತಂಡ ರಾಜ್ಯಕ್ಕೆ ಬಂದು ಪರಿಸ್ಥಿತಿಯನ್ನು ಅಧ್ಯಯನ ಮಾಡಬೇಕು. ಬರ ಪರಿಹಾರಕ್ಕೆ ಸಂಬಂಧಿಸಿದಂತೆ NDRF ನಿಯಮಗಳಲ್ಲಿ ಬದಲಾವಣೆ ಅಗತ್ಯವಿದೆ. ಈ ವಿಚಾರದಲ್ಲಿ ಕೇಂದ್ರ ಸರ್ಕಾರ ಮಧ್ಯಪ್ರವೇಶ ಮಾಡಬೇಕು ಎಂದು ಅವರು ಒತ್ತಾಯಿಸಿದರು.

ರಾಜ್ಯ ಸರ್ಕಾರದಿಂದ ನೀಡಬೇಕಾದ ಅನುದಾನ ಹಾಗೂ ಮುಂದಿನ ಕ್ರಮಗಳ ಕುರಿತು ಮುಖ್ಯಮಂತ್ರಿ ನಿರ್ಧಾರ ಕೈಗೊಳ್ಳಲಿದ್ದಾರೆ. ಬರ ಘೋಷಣೆ ಹಾಗೂ ಪರಿಹಾರಕ್ಕೆ ಸಂಬಂಧಿಸಿದ ಮುಂದಿನ ಪ್ರಕ್ರಿಯೆಯನ್ನು ಸರ್ಕಾರ ನಿಯಮಾನುಸಾರ ಕೈಗೊಳ್ಳಲಿದೆ ಎಂದು ಸಚಿವ ಸಂತೋಷ್ ಲಾಡ್ ತಿಳಿಸಿದರು.

ಬೆಂಗಳೂರಿನಲ್ಲಿ ಖಾಕಿ ಬಿಗ್ ಬೇಟೆ; 55.8 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ, 39 ಡ್ರಗ್ ಪೆಡ್ಲರ್ʼಗಳ ಬಂಧನ

0

ಬೆಂಗಳೂರು: ನಗರದಲ್ಲಿ ಮಾದಕ ವಸ್ತುಗಳ ಜಾಲವನ್ನು ಬೇರುಸಹಿತ ಕಿತ್ತೊಗೆಯಲು ಬೆಂಗಳೂರು ನಗರ ಪೊಲೀಸರು ಕೈಗೊಂಡಿರುವ ‘ಮಿಷನ್ RISE’ ಹಾಗೂ ‘ಬೇಡ ಬ್ರೋ’ ಅಭಿಯಾನಕ್ಕೆ ಭರ್ಜರಿ ಯಶಸ್ಸು ಸಿಕ್ಕಿದೆ. ಸಿಸಿಬಿ ಸೇರಿದಂತೆ ಒಟ್ಟು 16 ಪೊಲೀಸ್ ಘಟಕಗಳು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಬರೋಬ್ಬರಿ 55.8 ಕೋಟಿ ರೂಪಾಯಿ ಮೌಲ್ಯದ 200 ಕೆಜಿಗೂ ಅಧಿಕ ಮಾದಕ ವಸ್ತುಗಳನ್ನು ಜಪ್ತಿ ಮಾಡಲಾಗಿದೆ.

ಈ ಕಾರ್ಯಾಚರಣೆಯಲ್ಲಿ 8 ಮಂದಿ ವಿದೇಶಿಯರು ಹಾಗೂ 21 ಮಂದಿ ಅನ್ಯರಾಜ್ಯದವರು ಸೇರಿದಂತೆ ಒಟ್ಟು 39 ಆರೋಪಿಗಳನ್ನು ಬಂಧಿಸಲಾಗಿದೆ. ಕಳೆದ ಹತ್ತು ದಿನಗಳಿಂದ ಪೊಲೀಸರು ಸತತವಾಗಿ ಕಾರ್ಯಾಚರಣೆ ನಡೆಸಿ ನಗರದ ವಿವಿಧ ಭಾಗಗಳಲ್ಲಿ ಸಕ್ರಿಯವಾಗಿದ್ದ ಮಾದಕ ವಸ್ತು ದಂಧೆಕೋರರ ಜಾಲವನ್ನು ಭೇದಿಸಿದ್ದಾರೆ.

ಅಮೃತಹಳ್ಳಿ, ಗಿರಿನಗರ, ಕೆಐಎ ವಿಮಾನ ನಿಲ್ದಾಣ, ಯಶವಂತಪುರ, ಯಲಹಂಕ, ಹೆಬ್ಬಾಳ, ನಂದಿನಿ ಲೇಔಟ್, ಕಾಡುಗೋಡಿ, ಮಲ್ಲೇಶ್ವರಂ, ಗೋವಿಂದಪುರ, ಬಾಗಲೂರು, ಮಹದೇವಪುರ, ಮಹಾಲಕ್ಷ್ಮೀ ಲೇಔಟ್, ಬೇಗೂರು ಹಾಗೂ ಕೊತ್ತನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಕಾರ್ಯಾಚರಣೆ ನಡೆದಿದೆ.

55.8 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ

ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ವಿವಿಧ ರೀತಿಯ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಜಪ್ತಿಯಾದ ಮಾದಕ ವಸ್ತುಗಳ ವಿವರ ಹೀಗಿದೆ:

  • MDMA: 21 ಕೆಜಿ 641 ಗ್ರಾಂ
  • ಗಾಂಜಾ: 184 ಕೆಜಿ 625 ಗ್ರಾಂ
  • ಹೈಡ್ರೋ ಗಾಂಜಾ: 4 ಕೆಜಿ 493 ಗ್ರಾಂ
  • ಅಫೀಮು: 1 ಕೆಜಿ 65 ಗ್ರಾಂ
  • ಕೊಕೇನ್: 738 ಗ್ರಾಂ
  • ಮಾರ್ಫಿನ್: 25 ಗ್ರಾಂ

ಇವುಗಳ ಒಟ್ಟು ಮೌಲ್ಯ ಸುಮಾರು 55.8 ಕೋಟಿ ರೂಪಾಯಿ ಎಂದು ಪೊಲೀಸರು ತಿಳಿಸಿದ್ದಾರೆ. ಇದರ ಜೊತೆಗೆ ಆರೋಪಿಗಳಿಂದ 17 ಲಕ್ಷ ರೂಪಾಯಿ ನಗದು, 22 ಮೊಬೈಲ್ ಫೋನ್‌ಗಳು ಹಾಗೂ 5 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.

ದೆಹಲಿಯಲ್ಲೇ MDMA ತಯಾರಿಸಿ ಬೆಂಗಳೂರಿಗೆ ಪೂರೈಕೆ

ಈ ಸಂಪೂರ್ಣ ಕಾರ್ಯಾಚರಣೆಯಲ್ಲಿ ಅಮೃತಹಳ್ಳಿ ಪೊಲೀಸರು ಭಾರಿ ಪ್ರಮಾಣದ ಮಾದಕ ವಸ್ತು ಜಾಲವೊಂದನ್ನು ಭೇದಿಸಿದ್ದಾರೆ. ಬರೋಬ್ಬರಿ 28.8 ಕೋಟಿ ರೂಪಾಯಿ ಮೌಲ್ಯದ MDMA ವಶಪಡಿಸಿಕೊಂಡಿರುವ ಪೊಲೀಸರು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮೂಲದ ಆಮ್ನಿ ಸಿಂಗ್ ಹಾಗೂ ನೈಜೀರಿಯಾ ಮೂಲದ ಓಬಮ್ ಎಂಬ ಇಬ್ಬರನ್ನು ದೆಹಲಿಯಲ್ಲೇ ಬಂಧಿಸಿದ್ದಾರೆ.

ತನಿಖೆಯ ವೇಳೆ ಆರೋಪಿಗಳು ದೆಹಲಿಯಲ್ಲೇ MDMA ತಯಾರಿಸಿ, ಬಳಿಕ ಬೆಂಗಳೂರಿನ ವಿದ್ಯಾರ್ಥಿಗಳು ಹಾಗೂ ಸ್ಥಳೀಯ ಗ್ರಾಹಕರಿಗೆ ಮಾರಾಟ ಮಾಡುತ್ತಿದ್ದರು ಎಂಬುದು ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನಗರದಲ್ಲಿ ಮಾದಕ ವಸ್ತುಗಳ ಜಾಲವನ್ನು ಸಂಪೂರ್ಣವಾಗಿ ಮಟ್ಟಹಾಕುವ ಉದ್ದೇಶದಿಂದ ಕಾರ್ಯಾಚರಣೆ ಮುಂದುವರಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ‘ಮಿಷನ್ RISE’ ಹಾಗೂ ‘ಬೇಡ ಬ್ರೋ’ ಅಭಿಯಾನದಡಿ ಮಾದಕ ವಸ್ತುಗಳ ಮಾರಾಟ ಮತ್ತು ಪೂರೈಕೆಯಲ್ಲಿ ತೊಡಗಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತಿದೆ.

ಬೆಂಗಳೂರು ಪೊಲೀಸರ ಭರ್ಜರಿ ಕಾರ್ಯಾಚರಣೆ: ಎಲೆಕ್ಟ್ರಾನಿಕ್ ಸಿಟಿ, ವೈಟ್ ಫೀಲ್ಡ್ʼನಲ್ಲಿ 105 ಅಕ್ರಮ ಬಾಂಗ್ಲಾದೇಶಿ ವಲಸಿಗರು ಪತ್ತೆ

0

ಬೆಂಗಳೂರು: ಅಕ್ರಮ ವಲಸಿಗರ ಪತ್ತೆ ಹಾಗೂ ಪರಿಶೀಲನೆಗಾಗಿ ಬೆಂಗಳೂರು ನಗರ ಪೊಲೀಸರು ಕೈಗೊಂಡಿರುವ ‘ಆಪರೇಷನ್ ಮುಕ್ತ’ ಕಾರ್ಯಾಚರಣೆಯಡಿ 105 ಮಂದಿ ಅಕ್ರಮ ಬಾಂಗ್ಲಾದೇಶಿ ವಲಸಿಗರನ್ನು ಪತ್ತೆಹಚ್ಚಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೆಂಗಳೂರಿನ ಮೂರು ವಿಭಾಗಗಳಲ್ಲಿ ಅಕ್ರಮ ವಲಸಿಗರ ಪರಿಶೀಲನೆ ನಡೆಸಲಾಗಿದ್ದು, ಈ ವೇಳೆ ಒಟ್ಟು 2,944 ಮಂದಿಯ ದಾಖಲೆಗಳನ್ನು ಪರಿಶೀಲಿಸಲಾಗಿದೆ. ಈ ಪೈಕಿ 105 ಮಂದಿ ಅಕ್ರಮವಾಗಿ ವಾಸಿಸುತ್ತಿರುವ ಬಾಂಗ್ಲಾದೇಶಿ ವಲಸಿಗರು ಪತ್ತೆಯಾಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಎಲೆಕ್ಟ್ರಾನಿಕ್ ಸಿಟಿ ವಿಭಾಗದಲ್ಲಿ ಒಟ್ಟು 1,909 ಮಂದಿಯ ದಾಖಲೆಗಳನ್ನು ಪರಿಶೀಲನೆ ನಡೆಸಲಾಗಿದೆ. ಈ ವೇಳೆ 43 ಮಂದಿ ಅಕ್ರಮ ಬಾಂಗ್ಲಾದೇಶಿ ವಲಸಿಗರು ಪತ್ತೆಯಾಗಿದ್ದಾರೆ.

ಇನ್ನು ವೈಟ್‌ಫೀಲ್ಡ್ ವಿಭಾಗದಲ್ಲಿ 1,035 ಮಂದಿಯನ್ನು ಪರಿಶೀಲನೆಗೆ ಒಳಪಡಿಸಲಾಗಿದ್ದು, 62 ಮಂದಿ ಅಕ್ರಮ ಬಾಂಗ್ಲಾದೇಶಿ ವಲಸಿಗರು ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪತ್ತೆಯಾದ ಒಟ್ಟು 105 ಮಂದಿಯ ಮಾಹಿತಿಯನ್ನು ವಿದೇಶಿ ಪ್ರಾದೇಶಿಕ ನೋಂದಣಿ ಕಚೇರಿ (FRRO)ಗೆ ನೀಡಲಾಗಿದೆ. ಮುಂದಿನ ಕಾನೂನು ಪ್ರಕ್ರಿಯೆಗಾಗಿ ಅವರನ್ನು ವಲಸಿಗರ ಕೇಂದ್ರಗಳಿಗೆ ಕಳುಹಿಸಲಾಗುತ್ತಿದೆ ಎಂದು ಬೆಂಗಳೂರು ನಗರ ಪೊಲೀಸರು ಮಾಹಿತಿ ನೀಡಿದ್ದಾರೆ.

ಅಕ್ರಮ ವಲಸಿಗರ ಪತ್ತೆ ಹಾಗೂ ದಾಖಲೆಗಳ ಪರಿಶೀಲನೆ ಮುಂದುವರಿಯಲಿದ್ದು, ಅಗತ್ಯ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.