Home Blog

“2028ರ ಕರ್ನಾಟಕ ಚುನಾವಣೆ ನಮ್ಮ ಗುರಿ”: ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಎಂ. ನಾಗರಾಜ್ ಹೇಳಿಕೆ

0

ಹುಬ್ಬಳ್ಳಿ: ಬಿಜೆಪಿಯ ನೂತನ ರಾಷ್ಟ್ರೀಯ ಉಪಾಧ್ಯಕ್ಷರಾಗಿ ನೇಮಕಗೊಂಡಿರುವ ಎಂ. ನಾಗರಾಜ್ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದು, ಹಿಂದುಳಿದ ವರ್ಗಗಳಿಗೆ ಈ ಜವಾಬ್ದಾರಿ ಸಿಕ್ಕಿರುವುದು ಸಂತಸದ ಸಂಗತಿ ಎಂದು ಹೇಳಿದ್ದಾರೆ.

ಜೊತೆಗೆ, 2028ರ ಕರ್ನಾಟಕ ವಿಧಾನಸಭಾ ಚುನಾವಣೆ ಬಿಜೆಪಿಯ ಪ್ರಮುಖ ಗುರಿ ಎಂದು ಸ್ಪಷ್ಟಪಡಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ತಮ್ಮ ನೇಮಕವನ್ನು ಹಿಂದುಳಿದ ವರ್ಗಗಳಿಗೆ ದೊರೆತ ಗೌರವವೆಂದು ಪರಿಗಣಿಸುತ್ತೇನೆ ಎಂದರು. ಈ ಜವಾಬ್ದಾರಿ ನೀಡಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರು, ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಹಾಗೂ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರಿಗೆ ಕೃತಜ್ಞತೆ ಸಲ್ಲಿಸಿದರು.

2028ರ ಕರ್ನಾಟಕ ವಿಧಾನಸಭಾ ಚುನಾವಣೆ ಪಕ್ಷದ ಪ್ರಮುಖ ಗುರಿಯಾಗಿದ್ದು, ಚುನಾವಣಾ ಫಲಿತಾಂಶವೇ ನಮ್ಮ ದೊಡ್ಡ ಸವಾಲು ಎಂದು ಅವರು ಹೇಳಿದರು. ರಾಜ್ಯದಲ್ಲಿ ಬಿಜೆಪಿಯನ್ನು ಮತ್ತಷ್ಟು ಬಲಪಡಿಸಿ, ಜನರೊಂದಿಗೆ ನೇರ ಸಂಪರ್ಕ ಸಾಧಿಸಿ ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಕೆಲಸ ಮಾಡುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆಗೆ ಹೆಚ್ಚಿನ ಒತ್ತು ನೀಡುವುದಾಗಿ ಎಂ. ನಾಗರಾಜ್ ತಿಳಿಸಿದರು. ರಾಷ್ಟ್ರೀಯ ಜವಾಬ್ದಾರಿಯ ಬೆನ್ನಲ್ಲೇ 2028ರ ಚುನಾವಣೆಯ ಗುರಿ ಘೋಷಿಸಿರುವುದು ರಾಜ್ಯ ಬಿಜೆಪಿ ಸಂಘಟನೆಯಲ್ಲಿ ಹೊಸ ಚಟುವಟಿಕೆಗೆ ಸಂಕೇತವೆಂದು ಪರಿಗಣಿಸಲಾಗಿದೆ.

Tumakuru News: ಮಧುಗಿರಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಬಂಧನ!

0

ತುಮಕೂರು: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಕೊಡಿಗೇನಹಳ್ಳಿ ಪೊಲೀಸರು ಬಂಧಿಸಿರುವ ಘಟನೆ ಮಧುಗಿರಿ ತಾಲೂಕಿನ ಕಸಿನಾಯಕನಹಳ್ಳಿ ಗೇಟ್ ಬಳಿ ನಡೆದಿದೆ.

ಬಂಧಿತರನ್ನು ಜಿಲಾನ್ (30), ಕಲ್ಯಾಣಕುಮಾರ್ (27) ಮತ್ತು ಚರಣ್ (26) ಎಂದು ಗುರುತಿಸಲಾಗಿದೆ. ಆರೋಪಿಗಳು ಮಧುಗಿರಿ-ಹಿಂದೂಪುರ ರಸ್ತೆಯ ಕಸಿನಾಯಕನಹಳ್ಳಿ ಗೇಟ್ ಬಳಿ ಗ್ರಾಹಕರಿಗೆ ಗಾಂಜಾ ಮಾರಾಟ ಮಾಡುತ್ತಿದ್ದರೆಂಬ ಮಾಹಿತಿ ಪೊಲೀಸರಿಗೆ ಲಭಿಸಿತ್ತು.

ಖಚಿತ ಮಾಹಿತಿಯ ಮೇರೆಗೆ ಕೊಡಿಗೇನಹಳ್ಳಿ ಪೊಲೀಸರು ದಾಳಿ ನಡೆಸಿ ಮೂವರನ್ನೂ ವಶಕ್ಕೆ ಪಡೆದು ಬಂಧಿಸಿದ್ದಾರೆ. ಬಳಿಕ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ಬಂಧಿತ ಆರೋಪಿಗಳು ಮಧುಗಿರಿ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯ ನಿವಾಸಿಗಳಾಗಿದ್ದು, ಪ್ರಕರಣದ ಕುರಿತು ಪೊಲೀಸರು ಮುಂದಿನ ತನಿಖೆ ಮುಂದುವರಿಸಿದ್ದಾರೆ.

ಟ್ರಾಫಿಕ್ ಪೊಲೀಸರಿಗೆ ಬೆದರಿಕೆ ಪ್ರಕರಣ: ಜೆಡಿಎಸ್ ನಾಯಕ ಗೊಟ್ಟಿಗೆರೆ ಮಂಜುಗೆ ಜಾಮೀನು!

0

ಬೆಂಗಳೂರು: ಟ್ರಾಫಿಕ್ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆಗೆ ಯತ್ನಿಸಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಜೆಡಿಎಸ್ ಮುಖಂಡ ಗೊಟ್ಟಿಗೆರೆ ಮಂಜು ಅವರಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ಪ್ರಕರಣದ ಹಿನ್ನೆಲೆಯಲ್ಲಿ ಪೊಲೀಸರು ಗೊಟ್ಟಿಗೆರೆ ಮಂಜು ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ವಿಚಾರಣೆ ನಡೆಸಿದ ಬಳಿಕ ನ್ಯಾಯಾಲಯ ಅವರಿಗೆ ಜಾಮೀನು ನೀಡಿದೆ.

ಪ್ರಕರಣ ಏನು?

ಗೊಟ್ಟಿಗೆರೆಯಲ್ಲಿ ಭಾನುವಾರ ಭಾರೀ ಟ್ರಾಫಿಕ್ ಜಾಮ್ ಉಂಟಾಗಿದ್ದ ವೇಳೆ ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸ್ ಸಿಬ್ಬಂದಿ ಅರುಣ್ ಅವರು ಗೊಟ್ಟಿಗೆರೆ ಮಂಜು ಪ್ರಯಾಣಿಸುತ್ತಿದ್ದ ಕಾರನ್ನು ತಡೆದಿದ್ದರು. ಇದರಿಂದ ಆಕ್ರೋಶಗೊಂಡ ಮಂಜು ಕಾರಿನಿಂದ ಇಳಿದು ಸಿಬ್ಬಂದಿಯೊಂದಿಗೆ ವಾಗ್ವಾದ ನಡೆಸಿದರೆಂದು ಆರೋಪಿಸಲಾಗಿದೆ.

ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿ ಇಬ್ಬರ ನಡುವೆ ತೀವ್ರ ವಾಗ್ವಾದ ನಡೆದಿರುವ ದೃಶ್ಯಗಳು ಕಾಣಿಸಿಕೊಂಡಿವೆ.

ಟ್ರಾಫಿಕ್ ಸಿಬ್ಬಂದಿ ಅರುಣ್ ನೀಡಿರುವ ದೂರಿನ ಪ್ರಕಾರ, ಮಂಜು ಅವರು ಅವಾಚ್ಯ ಶಬ್ದಗಳಿಂದ ನಿಂದಿಸಿ, ತಳ್ಳಾಡಿಸಿ, ಕಾಲಿನಿಂದ ಒದೆಯಲು ಯತ್ನಿಸಿದ್ದಲ್ಲದೆ, “ನೀನು ಇಲ್ಲಿ ಹೇಗೆ ಕೆಲಸ ಮಾಡ್ತೀಯೋ ನಾನು ನೋಡ್ತೀನಿ” ಎಂದು ಬೆದರಿಕೆ ಹಾಕಿದ್ದಾರೆ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.

ಈ ಸಂಬಂಧ ಹುಳಿಮಾವು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬಳಿಕ ಮಂಜು ಅವರನ್ನು ಬಂಧಿಸಲಾಗಿತ್ತು. ಇದೀಗ ನ್ಯಾಯಾಲಯ ಜಾಮೀನು ಮಂಜೂರು ಮಾಡಿದ್ದು, ಪ್ರಕರಣದ ತನಿಖೆ ಮುಂದುವರಿದಿದೆ.

ನಾಗರಪಂಚಮಿ ದಿನವೇ ವಿಷಸರ್ಪದ ದಾಳಿ; ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ದಾರುಣ ಸಾವು

0

ಬೆಳಗಾವಿ: ಜಿಲ್ಲೆಯ ರಾಯಬಾಗ ಪಟ್ಟಣದಲ್ಲಿ ನಾಗರಪಂಚಮಿ ಹಬ್ಬದ ದಿನವೇ ವಿಷಾದಕರ ಘಟನೆ ನಡೆದಿದೆ. ಜಮೀನಿನಲ್ಲಿ ಕಸ ತೆಗೆಯುತ್ತಿದ್ದ ವೇಳೆ ವಿಷಕಾರಿ ಕೊಳಕುಮಂಡಲ ಹಾವು ಕಚ್ಚಿದ ಪರಿಣಾಮ ಸತ್ಯವ್ವ ಶಿಂಗೆ (43) ಎಂಬ ಮಹಿಳೆ ಮೃತಪಟ್ಟಿದ್ದಾರೆ.

ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಅಡಗಿದ್ದ ಹಾವು ಏಕಾಏಕಿ ಸತ್ಯವ್ವ ಅವರಿಗೆ ಕಚ್ಚಿದೆ. ಹಾವಿನ ವಿಷ ದೇಹಕ್ಕೆ ವ್ಯಾಪಿಸಿ ತೀವ್ರ ಅಸ್ವಸ್ಥಗೊಂಡ ಅವರನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿತ್ತು. ಆದರೆ, ಚಿಕಿತ್ಸೆಗಾಗಿ ಆಸ್ಪತ್ರೆಗೆ ತಲುಪುವ ಮುನ್ನವೇ ಮಾರ್ಗಮಧ್ಯೆ ಅವರು ಮೃತಪಟ್ಟಿದ್ದಾರೆ.

ನಾಗರಪಂಚಮಿ ಹಬ್ಬದ ಸಂಭ್ರಮದಲ್ಲಿದ್ದ ರಾಯಬಾಗ ಪಟ್ಟಣದಲ್ಲಿ ಈ ದುರಂತದಿಂದ ವಿಷಾದದ ವಾತಾವರಣ ನಿರ್ಮಾಣವಾಗಿದೆ. ಘಟನೆಗೆ ಸಂಬಂಧಿಸಿದಂತೆ ರಾಯಬಾಗ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನೊಂದೆಡೆ, ಶಿವಮೊಗ್ಗ ತಾಲೂಕಿನ ಉಂಬಳಬೈಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೋಟವೊಂದರಲ್ಲಿ ಬೃಹತ್ ಗಾತ್ರದ ಹೆಬ್ಬಾವು ಕಾಣಿಸಿಕೊಂಡು ಸ್ಥಳೀಯರಲ್ಲಿ ಆತಂಕ ಮೂಡಿಸಿತ್ತು.

ಉಂಬಳಬೈಲು ಗ್ರಾಮದ ಪ್ರಮೋದ್ ಎಂಬುವವರ ತೋಟದಲ್ಲಿ ದಿಢೀರ್ ಹೆಬ್ಬಾವು ಕಾಣಿಸಿಕೊಂಡಿದ್ದು, ತೋಟದ ಕಾರ್ಮಿಕರು ಹಾಗೂ ಸ್ಥಳೀಯರು ಭಯಭೀತರಾಗಿದ್ದರು. ಮಾಹಿತಿ ತಿಳಿದ ತಕ್ಷಣ ಆರ್‌ಎಫ್‌ಒ ಪ್ರದೀಪ್ ನೇತೃತ್ವದ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ತೆರಳಿ ಕಾರ್ಯಾಚರಣೆ ನಡೆಸಿದರು.

ಹೆಬ್ಬಾವಿಗೆ ಯಾವುದೇ ಗಾಯವಾಗದಂತೆ ಎಚ್ಚರಿಕೆಯಿಂದ ಸೆರೆಹಿಡಿದ ಅರಣ್ಯ ಸಿಬ್ಬಂದಿ, ಬಳಿಕ ಅದನ್ನು ಸುರಕ್ಷಿತವಾಗಿ ದಟ್ಟ ಅರಣ್ಯ ಪ್ರದೇಶಕ್ಕೆ ಬಿಡಲಾಯಿತು. ತ್ವರಿತವಾಗಿ ಕಾರ್ಯಾಚರಣೆ ನಡೆಸಿ ಹೆಬ್ಬಾವನ್ನು ರಕ್ಷಿಸಿದ ಅರಣ್ಯಾಧಿಕಾರಿ ಪ್ರದೀಪ್ ಹಾಗೂ ಸಿಬ್ಬಂದಿಯ ಕಾರ್ಯಕ್ಕೆ ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ರಾಷ್ಟ್ರೀಯ ತಂಡದಲ್ಲಿ ಭರ್ಜರಿ ಬದಲಾವಣೆ: ನೂತನ ಅಧ್ಯಕ್ಷ ನಿತಿನ್ ನಬಿನ್‌ರಿಂದ ಹೊಸ ತಂಡ ಘೋಷಣೆ

0

ನವದೆಹಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬಿನ್ ಅಧಿಕಾರ ವಹಿಸಿಕೊಂಡ ಬಳಿಕ ಪಕ್ಷದ ಕೇಂದ್ರ ಸಂಘಟನೆಯಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದೆ. ಮುಂಬರುವ ವಿಧಾನಸಭಾ ಚುನಾವಣೆಗಳಿಗೆ ಸಜ್ಜಾಗುತ್ತಿರುವ ಬೆನ್ನಲ್ಲೇ ಅನುಭವಿ ನಾಯಕರು ಹಾಗೂ ಪ್ರಮುಖ ಮುಖಂಡರಿಗೆ ಹೊಸ ಜವಾಬ್ದಾರಿಗಳನ್ನು ನೀಡಲಾಗಿದೆ.

ಬಿಜೆಪಿ ಹೊಸ ರಾಷ್ಟ್ರೀಯ ಘಟಕದಲ್ಲಿ 13 ರಾಷ್ಟ್ರೀಯ ಉಪಾಧ್ಯಕ್ಷರು, 8 ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳು ಹಾಗೂ ವಿವಿಧ ಮೋರ್ಚಾಗಳಿಗೆ ಹೊಸ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಮಾಜಿ ಮುಖ್ಯಮಂತ್ರಿ ವಸುಂಧರಾ ರಾಜೇ ಸಿಂಧಿಯಾ ಹಾಗೂ ಹಿರಿಯ ನಾಯಕ ರಾಮ್ ಮಾಧವ್ ಅವರಿಗೆ ರಾಷ್ಟ್ರೀಯ ಉಪಾಧ್ಯಕ್ಷ ಸ್ಥಾನ ನೀಡಲಾಗಿದೆ. ಮಾಜಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರನ್ನು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.

ಕರ್ನಾಟಕದ ಪ್ರೊ. ಎಂ. ನಾಗರಾಜ್ ಅವರಿಗೆ ರಾಷ್ಟ್ರೀಯ ಉಪಾಧ್ಯಕ್ಷ ಸ್ಥಾನ ನೀಡಲಾಗಿದ್ದು, ಬಿ.ಎಲ್. ಸಂತೋಷ್ ಅವರು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಹುದ್ದೆಯಲ್ಲಿ ಮುಂದುವರಿದಿದ್ದಾರೆ. ಅನಿಲ್ ಆಂಟನಿ ರಾಷ್ಟ್ರೀಯ ಕಾರ್ಯದರ್ಶಿಯಾಗಿ ಮುಂದುವರಿದರೆ, ಅನಿಲ್ ಬಲೂನಿ ಅವರಿಗೆ ರಾಷ್ಟ್ರೀಯ ಮಾಧ್ಯಮದ ಜವಾಬ್ದಾರಿ ಮುಂದುವರಿಸಲಾಗಿದೆ.

ಹೊಸ ತಂಡದಲ್ಲಿ 13 ರಾಷ್ಟ್ರೀಯ ಉಪಾಧ್ಯಕ್ಷರ ಪೈಕಿ ಐವರು ಮಹಿಳೆಯರಾಗಿದ್ದಾರೆ. 8 ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳ ಪೈಕಿ ಸ್ಮೃತಿ ಇರಾನಿ ಏಕೈಕ ಮಹಿಳೆಯಾಗಿದ್ದಾರೆ.

ಇದೇ ವೇಳೆ ಬಿಜೆಪಿ ಸಾಮಾಜಿಕ ಜಾಲತಾಣ ಮತ್ತು ಐಟಿ ಸೆಲ್‌ನ ಪ್ರಮುಖ ಜವಾಬ್ದಾರಿ ನಿರ್ವಹಿಸುತ್ತಿದ್ದ ಅಮಿತ್ ಮಾಳವೀಯ ಅವರ ಹೆಸರು ಹೊಸ ಪಟ್ಟಿಯಲ್ಲಿ ಕಾಣಿಸಿಕೊಂಡಿಲ್ಲ. ದೀಪಕ್ ಮಹಾಸ್ಕರೆ ಅವರನ್ನು ಸಾಮಾಜಿಕ ಜಾಲತಾಣ ಸಂಚಾಲಕರಾಗಿ ನೇಮಕ ಮಾಡಲಾಗಿದೆ.

ಯುವ ಮೋರ್ಚಾದಲ್ಲೂ ಮಹತ್ವದ ಬದಲಾವಣೆ

ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ಸ್ಥಾನದಲ್ಲಿದ್ದ ಸಂಸದ ತೇಜಸ್ವಿ ಸೂರ್ಯ ಅವರಿಗೆ ಬದಲಾಗಿ ಗುಜರಾತ್ ಮೂಲದ ಡಾ. ಹೇಮಾಂಗ್ ಜೋಶಿ ಅವರನ್ನು ನೂತನ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.

ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷರು: ವಸುಂಧರಾ ರಾಜೇ ಸಿಂಧಿಯಾ, ತೀರತ್ ಸಿಂಗ್ ರಾವತ್, ರಾಮ್ ಮಾಧವ್, ವೈಜಯಂತ್ ಜಯ್ ಪಾಂಡಾ, ಡಿ. ಪುರಂದೇಶ್ವರಿ, ರೇಖಾ ವರ್ಮಾ, ವರ್ಷಾಬೆನ್ ನರೇಂದ್ರಭಾಯ್ ದೋಷಿ, ಡಾ. ಭಾರತಿ ಪ್ರವೀಣ್ ಪವಾರ್, ಸರ್ದಾರ್ ಮನ್‌ಪ್ರೀತ್ ಸಿಂಗ್ ಬಾದಲ್, ಲಾಲ್ ಸಿಂಗ್ ಆರ್ಯ, ಪ್ರೊ. ಎಂ. ನಾಗರಾಜ್, ಪ್ರೊ. ತಾರಿಕ್ ಮನ್ಸೂರ್ ಹಾಗೂ ಡಾ. ಮಧುಚಂದ್ರ ಕರ್.

ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನೆ): ಬಿ.ಎಲ್. ಸಂತೋಷ್ — ಕರ್ನಾಟಕ.

ರಾಷ್ಟ್ರೀಯ ಜಂಟಿ ಪ್ರಧಾನ ಕಾರ್ಯದರ್ಶಿಗಳು: ಶಿವಪ್ರಕಾಶ್, ಸೌದನ್ ಸಿಂಗ್.

ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳು: ವಿನೋದ್ ತಾವ್ಡೆ, ಸುನಿಲ್ ಬನ್ಸಾಲ್, ಬಿಪ್ಲಬ್ ಕುಮಾರ್ ದೇವ್, ಸ್ಮೃತಿ ಇರಾನಿ, ಸತೀಶ್ ಪೂನಿಯಾ, ಗಜೇಂದ್ರ ಪಟೇಲ್, ಹರೀಶ್ ದ್ವಿವೇದಿ ಹಾಗೂ ಸಂಜಯ್ ಭಾಟಿಯಾ.

ರಾಷ್ಟ್ರೀಯ ಕಾರ್ಯದರ್ಶಿಗಳು: ಕವಿತಾ ಪಾಟಿದಾರ್, ಕೆ. ಸುರೇಂದ್ರನ್, ಡಾ. ಭೋಲಾ ಸಿಂಗ್, ಡಾ. ಪ್ರದೀಪ್ ವರ್ಮಾ, ಜಗದೀಶ್ ಈಶ್ವರ್‌ಭಾಯ್ ಪಟೇಲ್, ಡಾ. ಸಂದೀಪ್ ಪಾಠಕ್, ಫಾಂಗ್ನಾನ್ ಕೊನ್ಯಾಕ್, ಸಂಗೀತಾ ಯಾದವ್, ಅನಿಲ್ ಆಂಟನಿ, ಎಂ. ವೆಂಕಟೇಶನ್, ಮನೋಜ್ ಟಿಗ್ಗಾ, ಸಿದ್ಧಾರ್ಥ ಶಂಭು, ಡಾ. ಸ್ವದೇಶ್ ಸಿಂಗ್, ಮೃಗಾಂಕ ದೇವ್ ಬರ್ಮನ್, ರೋಹನ್ ಗುಪ್ತಾ ಹಾಗೂ ಜೈ ಪ್ರಕಾಶ್.

 

ನಾಗರಪಂಚಮಿ ದಿನವೇ ಕೊಳಕುಮಂಡಲ ಹಾವು ಕಚ್ಚಿ 43 ವರ್ಷದ ಮಹಿಳೆ ಸಾವು!

0

ಬೆಳಗಾವಿ: ನಾಗರಪಂಚಮಿ ಹಬ್ಬದ ಸಂಭ್ರಮದ ನಡುವೆಯೇ ಬೆಳಗಾವಿ ಜಿಲ್ಲೆಯ ರಾಯಬಾಗ ಪಟ್ಟಣದಲ್ಲಿ ಹಾವು ಕಚ್ಚಿ 43 ವರ್ಷದ ಮಹಿಳೆ ಮೃತಪಟ್ಟಿರುವ ದುರ್ಘಟನೆ ನಡೆದಿದೆ.

ಮೃತರನ್ನು ಸತ್ಯವ್ವ ಶಿಂಗೆ (43) ಎಂದು ಗುರುತಿಸಲಾಗಿದೆ.

ಸತ್ಯವ್ವ ಅವರು ತಮ್ಮ ಜಮೀನಿನಲ್ಲಿ ಕಸ ತೆಗೆಯುವ ಕೆಲಸ ಮಾಡುತ್ತಿದ್ದ ವೇಳೆ ಪೊದೆಯಲ್ಲಿ ಅಡಗಿದ್ದ ವಿಷಕಾರಿ ಕೊಳಕುಮಂಡಲ ಹಾವು ಏಕಾಏಕಿ ಕಚ್ಚಿದೆ. ಹಾವಿನ ವಿಷ ದೇಹಕ್ಕೆ ವ್ಯಾಪಿಸುತ್ತಿದ್ದಂತೆ ಅವರು ತೀವ್ರ ಅಸ್ವಸ್ಥಗೊಂಡಿದ್ದು, ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ, ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆಯೇ ಅವರು ಕೊನೆಯುಸಿರೆಳೆದರು.

ನಾಗರಪಂಚಮಿ ಹಬ್ಬದ ದಿನವೇ ಈ ದುರಂತ ಸಂಭವಿಸಿರುವುದು ಕುಟುಂಬಸ್ಥರು ಹಾಗೂ ಗ್ರಾಮಸ್ಥರ ದುಃಖವನ್ನು ಇನ್ನಷ್ಟು ಹೆಚ್ಚಿಸಿದೆ. ಘಟನೆಗೆ ಸಂಬಂಧಿಸಿದಂತೆ ರಾಯಬಾಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ಕ್ರಮ ಕೈಗೊಳ್ಳಲಾಗಿದೆ.

ಪ್ರಜ್ವಲ್ ಬಳಿ ಮತ್ತೊಂದು ಮೊಬೈಲ್! ದೇವರ ಫೋಟೋ ಹಿಂದೆ ವಿವೋ ಫೋನ್‌ ಪತ್ತೆ

0

ಬೆಂಗಳೂರು: ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಮತ್ತೆ ಸುದ್ದಿಯಲ್ಲಿದೆ. ಜೈಲಿನಲ್ಲಿರುವ ವಿಐಪಿ ಕೈದಿಗಳ ವಿಚಾರವಾಗಿ ಆಗಾಗ್ಗೆ ಸುದ್ದಿಯಾಗುತ್ತಿರುವ ಬೆನ್ನಲ್ಲೇ ಇದೀಗ ಮತ್ತೊಂದು ಮೊಬೈಲ್‌ ಫೋನ್‌ ಪತ್ತೆಯಾಗಿರುವುದು ಕಾರಾಗೃಹ ಇಲಾಖೆಯಲ್ಲಿ ಸಂಚಲನ ಮೂಡಿಸಿದೆ.

ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಜೈಲಿನಲ್ಲಿದ್ದಾಗ ಮೊಬೈಲ್‌ ಹಾಗೂ ಪೆನ್‌ಡ್ರೈವ್‌ ಹೊಂದಿದ್ದ ಪ್ರಕರಣದ ಬೆನ್ನಲ್ಲೇ ಮತ್ತೊಂದು ಮೊಬೈಲ್‌ ಪತ್ತೆಯಾಗಿದೆ. ಇತ್ತೀಚೆಗೆ ಸಿಸಿಬಿ ಅಧಿಕಾರಿಗಳು ನಡೆಸಿದ ದಾಳಿ ವೇಳೆ ಪ್ರಜ್ವಲ್‌ ರೇವಣ್ಣ ಬಳಿ ಮೊಬೈಲ್‌ ಪತ್ತೆಯಾಗಿತ್ತು ಎನ್ನಲಾಗಿದೆ.

ಇದರ ಬೆನ್ನಲ್ಲೇ ಅದೇ ದಿನ ಜೈಲು ಅಧಿಕಾರಿಗಳು ಪರಪ್ಪನ ಅಗ್ರಹಾರ ಜೈಲಿನಲ್ಲಿ ತಪಾಸಣೆ ನಡೆಸಿದ ವೇಳೆ ಮತ್ತೊಂದು ಮೊಬೈಲ್‌ ಫೋನ್‌ ಪತ್ತೆಯಾಗಿದೆ. ಜೈಲಿನಲ್ಲಿದ್ದ ದೇವರ ಫೋಟೋವೊಂದರ ಹಿಂದೆ ವಿವೋ ಕಂಪನಿಯ ಮೊಬೈಲ್‌ ಇರಿಸಿರುವುದು ಪತ್ತೆಯಾಗಿದೆ.

ಪತ್ತೆಯಾದ ಮೊಬೈಲ್‌ನಲ್ಲಿ ಸಿಮ್‌ ಇರಲಿಲ್ಲ ಹಾಗೂ ಅದು ಸ್ವಿಚ್‌ ಆಫ್‌ ಆಗಿತ್ತು ಎನ್ನಲಾಗಿದೆ. ಮೊಬೈಲ್‌ ಫೋನ್‌ ಅನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಇದನ್ನು ಯಾರು ಬಳಸುತ್ತಿದ್ದರು ಎಂಬ ಬಗ್ಗೆ ತನಿಖೆ ಆರಂಭಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಜೈಲಿನೊಳಗೆ ಮೊಬೈಲ್‌ ಹೇಗೆ ಪ್ರವೇಶಿಸಿತು, ಅದನ್ನು ಯಾರು ಬಳಸುತ್ತಿದ್ದರು ಹಾಗೂ ಇದರ ಹಿಂದೆ ಯಾರಾದರೂ ಇದ್ದಾರೆಯೇ ಎಂಬ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ದೆಹಲಿಯಲ್ಲಿ ಪ್ರಧಾನಿ ಮೋದಿ ಭೇಟಿಯಾದ ಮಹಾರಾಷ್ಟ್ರ ಸಿಎಂ ಫಡ್ನವೀಸ್‌

ನವದೆಹಲಿ: ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್‌ ಅವರು ಸೋಮವಾರ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿದ್ದಾರೆ. ರಾಜ್ಯದಲ್ಲಿ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಯೋಜನೆಗಳ ಪ್ರಗತಿ ಹಾಗೂ ಕೇಂದ್ರ-ರಾಜ್ಯ ಸಹಭಾಗಿತ್ವದ ಯೋಜನೆಗಳಿಗೆ ಹೆಚ್ಚಿನ ಬೆಂಬಲ ನೀಡುವಂತೆ ಪ್ರಧಾನಿಗೆ ಮನವಿ ಮಾಡಿರುವುದಾಗಿ ಫಡ್ನವೀಸ್‌ ತಿಳಿಸಿದ್ದಾರೆ.

ಪ್ರಧಾನಿ ಮೋದಿ ಅವರೊಂದಿಗಿನ ಭೇಟಿಯ ವಿವರಗಳನ್ನು ಫಡ್ನವೀಸ್‌ ತಮ್ಮ ‘ಎಕ್ಸ್‌’ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಮಹಾರಾಷ್ಟ್ರದ ಅಭಿವೃದ್ಧಿಗೆ ಪ್ರಧಾನಮಂತ್ರಿಯವರ ಮಾರ್ಗದರ್ಶನ ಅತ್ಯಂತ ಮಹತ್ವದ್ದಾಗಿದೆ. ಅವರ ಮಾರ್ಗದರ್ಶನ ಹಾಗೂ ರಾಜ್ಯಕ್ಕೆ ನೀಡುತ್ತಿರುವ ಬೆಂಬಲಕ್ಕಾಗಿ ಕೃತಜ್ಞನಾಗಿದ್ದೇನೆ ಎಂದು ಫಡ್ನವೀಸ್‌ ತಿಳಿಸಿದ್ದಾರೆ.

ಪ್ರಧಾನಿಯವರೊಂದಿಗಿನ ಭೇಟಿ ತಮಗೆ ಸಕಾರಾತ್ಮಕ ಶಕ್ತಿಯನ್ನು ನೀಡಿದೆ. ರಾಜ್ಯದ ಅಭಿವೃದ್ಧಿಗೆ ಸಂಬಂಧಿಸಿದ ಹಲವು ವಿಚಾರಗಳ ಕುರಿತು ಪ್ರಧಾನಿಯವರೊಂದಿಗೆ ಚರ್ಚೆ ನಡೆಸಿದ್ದು, ಮುಂದಿನ ದಿನಗಳಲ್ಲಿ ಮಹಾರಾಷ್ಟ್ರದ ಅಭಿವೃದ್ಧಿ ಯೋಜನೆಗಳಿಗೆ ಕೇಂದ್ರದಿಂದ ಮತ್ತಷ್ಟು ಸಹಕಾರ ದೊರೆಯುವ ವಿಶ್ವಾಸವಿದೆ ಎಂದು ಹೇಳಿದ್ದಾರೆ.

ನಿರ್ಮಲಾ ಸೀತಾರಾಮನ್‌ ಜೊತೆಗೂ ಮಾತುಕತೆ

ಇದೇ ವೇಳೆ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್‌ ಅವರು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರನ್ನು ಕೂಡ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.

ಮುಂಬೈ-ವಧವನ್‌ ಎಕ್ಸ್‌ಪ್ರೆಸ್‌ವೇ ಸಂಪರ್ಕ ಯೋಜನೆಯ ಭಾಗವಾಗಿರುವ ಉತ್ತನ್‌-ವಿರಾರ್‌ ಸಮುದ್ರ ಸೇತುವೆ ನಿರ್ಮಾಣಕ್ಕೆ ಜಪಾನ್‌ ಇಂಟರ್‌ನ್ಯಾಷನಲ್‌ ಕೋಆಪರೇಷನ್‌ ಏಜೆನ್ಸಿ (JICA)ಯಿಂದ ಹಣಕಾಸು ನೆರವು ಪಡೆಯಲು ಅನುಮೋದನೆ ನೀಡುವಂತೆ ಫಡ್ನವೀಸ್‌ ಮನವಿ ಸಲ್ಲಿಸಿದ್ದಾರೆ.

ಈ ಮನವಿಗೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಸಕಾರಾತ್ಮಕವಾಗಿ ಸ್ಪಂದಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ಫಡ್ನವೀಸ್‌ ತಿಳಿಸಿದ್ದಾರೆ. ದೆಹಲಿಯಲ್ಲಿನ ಪ್ರಧಾನಿ ಮೋದಿ ಹಾಗೂ ನಿರ್ಮಲಾ ಸೀತಾರಾಮನ್‌ ಅವರೊಂದಿಗಿನ ಭೇಟಿಯ ಬಳಿಕ ಮುಖ್ಯಮಂತ್ರಿ ಫಡ್ನವೀಸ್‌ ಮುಂಬೈಗೆ ವಾಪಸಾಗಲಿದ್ದಾರೆ. ಮಂಗಳವಾರ ಮುಂಬೈನ ‘ದಿ ಲಲಿತ್‌’ ಹೋಟೆಲ್‌ನಲ್ಲಿ ಇಂಡೋ-ಅಮೆರಿಕನ್‌ ಚೇಂಬರ್‌ ಆಫ್‌ ಕಾಮರ್ಸ್‌ ಆಯೋಜಿಸಿರುವ 2026ರ ರಾಷ್ಟ್ರೀಯ ಸಮಾವೇಶವನ್ನು ಅವರು ಉದ್ಘಾಟಿಸಿ ಮಾತನಾಡಲಿದ್ದಾರೆ.

ಗದಗ ಪೊಲೀಸರ ಭರ್ಜರಿ ಬೇಟೆ: ₹4.80 ಕೋಟಿ ಮೌಲ್ಯದ ಸ್ವತ್ತು ಪತ್ತೆ, ₹3.68 ಕೋಟಿ ಮೌಲ್ಯದ ವಸ್ತು ವಶ

ಗದಗ: ಕತ್ತಲಲ್ಲಿ ಮನೆಗೆ ಕನ್ನ ಹಾಕಿದ ಕಳ್ಳರು… ನಂಬಿಸಿ ಹಣ ಎಗರಿಸಿದ ವಂಚಕರು… ಕಣ್ಮರೆಯಾದ ಮೊಬೈಲ್‌ಗಳು… ಕಳ್ಳತನವಾದ ವಾಹನಗಳು… ಹೀಗೆ ಜನರ ಕೈತಪ್ಪಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿಯ ಬೆನ್ನತ್ತಿದ ಗದಗ ಜಿಲ್ಲಾ ಪೊಲೀಸರು, ಒಂದು ವರ್ಷದ ಅವಧಿಯಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿ ಆರೋಪಿಗಳ ಜಾಡು ಹಿಡಿದಿದ್ದಾರೆ. ಕಳ್ಳರ ಕೈ ಸೇರಿದ್ದ ಚಿನ್ನ–ಬೆಳ್ಳಿ, ನಗದು, ವಾಹನ ಹಾಗೂ ಮೊಬೈಲ್‌ಗಳನ್ನು ಪತ್ತೆಹಚ್ಚಿ ಮತ್ತೆ ವಾರಸುದಾರರ ಕೈಗೆ ಒಪ್ಪಿಸಿದ್ದಾರೆ.

2025ರ ಆಗಸ್ಟ್‌ 1ರಿಂದ 2026ರ ಜುಲೈ 31ರವರೆಗೆ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ನಡೆದ ಕಳವು, ಮೋಸ–ವಂಚನೆ ಹಾಗೂ ಮೊಬೈಲ್ ಕಳವು ಪ್ರಕರಣಗಳಲ್ಲಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ₹4,80,46,501 ಮೌಲ್ಯದ ಸ್ವತ್ತು ಪತ್ತೆಯಾಗಿದ್ದು, ₹3,68,48,989 ಮೌಲ್ಯದ ಸ್ವತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಪತ್ತೆಯಾದ ಸ್ವತ್ತುಗಳನ್ನು ವಾರಸುದಾರರು ಹಾಗೂ ಫಿರ್ಯಾದಿದಾರರಿಗೆ ಹಸ್ತಾಂತರಿಸುವ ‘ಪ್ರಾಪರ್ಟಿ ರಿಟರ್ನ್ ಪರೇಡ್‌’ ಅನ್ನು ಸೋಮವಾರ ಗದಗ ಜಿಲ್ಲಾ ಪೊಲೀಸ್ ಭವನದಲ್ಲಿ ಆಯೋಜಿಸಲಾಗಿತ್ತು.

ಬೆಳಗಾವಿ ಉತ್ತರ ವಲಯದ ಐಜಿಪಿ ಸಂದೀಪ್ ಪಾಟೀಲ ಅವರ ಸಮ್ಮುಖದಲ್ಲಿ ಹಾಗೂ ಗದಗ ಜಿಲ್ಲಾ ಪೊಲೀಸ್ ಅಧೀಕ್ಷಕ ರೋಹನ್ ಜಗದೀಶ್ ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪತ್ತೆಯಾದ ಸ್ವತ್ತುಗಳನ್ನು ವಾರಸುದಾರರಿಗೆ ಹಸ್ತಾಂತರಿಸಲಾಯಿತು.

ಚಿನ್ನ ಕಳವು ಪ್ರಕರಣಗಳಲ್ಲಿ ಒಟ್ಟು 68 ಪ್ರಕರಣಗಳು ದಾಖಲಾಗಿದ್ದು, ಅವುಗಳಲ್ಲಿ 51 ಪ್ರಕರಣಗಳನ್ನು ಪತ್ತೆಹಚ್ಚಿ 95 ಆರೋಪಿಗಳನ್ನು ಬಂಧಿಸಲಾಗಿದೆ. ಕಳವಾಗಿದ್ದ 2,785.23 ಗ್ರಾಂ ಚಿನ್ನದ ಪೈಕಿ 1,736.69 ಗ್ರಾಂ ಚಿನ್ನವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಕಳವಾಗಿದ್ದ ಚಿನ್ನದ ಒಟ್ಟು ಮೌಲ್ಯ ₹2.30 ಕೋಟಿಗೂ ಅಧಿಕವಾಗಿದ್ದು, ಪತ್ತೆಯಾದ ಚಿನ್ನದ ಮೌಲ್ಯ ₹1,65,63,977 ಎಂದು ಪೊಲೀಸ್ ಇಲಾಖೆ ತಿಳಿಸಿದೆ.

ಇನ್ನು ಕಳ್ಳರ ಕಣ್ಣು ಬೆಳ್ಳಿಯ ಮೇಲೂ ಬಿದ್ದಿತ್ತು. ಒಟ್ಟು 55,850.02 ಗ್ರಾಂ ಬೆಳ್ಳಿ ಕಳವಾಗಿದ್ದು, ಅದರಲ್ಲಿ 37,191.39 ಗ್ರಾಂ ಬೆಳ್ಳಿಯನ್ನು ಪೊಲೀಸರು ಪತ್ತೆಹಚ್ಚಿದ್ದಾರೆ. ವಶಪಡಿಸಿಕೊಂಡ ಬೆಳ್ಳಿ ಆಭರಣಗಳ ಅಂದಾಜು ಮೌಲ್ಯ ₹60,52,877.

ನಗದು ಕಳವು ಪ್ರಕರಣಗಳಲ್ಲೂ ಪೊಲೀಸರು ಆರೋಪಿಗಳ ಜಾಡು ಹಿಡಿದಿದ್ದಾರೆ. ಕಳವಾಗಿದ್ದ ₹27,31,000 ನಗದಿನ ಪೈಕಿ ₹7,98,615 ಹಣವನ್ನು ಪತ್ತೆಹಚ್ಚಿ ವಶಪಡಿಸಿಕೊಳ್ಳಲಾಗಿದೆ.

ಬೈಕ್‌, ಕಾರು ಸೇರಿದಂತೆ ವಾಹನಗಳನ್ನು ಕಳವು ಮಾಡುತ್ತಿದ್ದವರ ಮೇಲೂ ಪೊಲೀಸರು ಬಿಗಿ ಕ್ರಮ ಕೈಗೊಂಡಿದ್ದಾರೆ. ಒಟ್ಟು 36 ವಾಹನ ಕಳವು ಪ್ರಕರಣಗಳು ದಾಖಲಾಗಿದ್ದು, ಅವುಗಳಲ್ಲಿ 23 ಪ್ರಕರಣಗಳನ್ನು ಪತ್ತೆಹಚ್ಚಲಾಗಿದೆ. ಈ ಪ್ರಕರಣಗಳಿಗೆ ಸಂಬಂಧಿಸಿದಂತೆ 16 ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದ್ದು, 40 ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಪತ್ತೆಯಾದ ವಾಹನಗಳ ಅಂದಾಜು ಮೌಲ್ಯ ₹17.13 ಲಕ್ಷ ಎಂದು ತಿಳಿಸಲಾಗಿದೆ.

ಮೋಸ–ವಂಚನೆ ಪ್ರಕರಣಗಳಲ್ಲೂ ಪೊಲೀಸರು ಆರೋಪಿಗಳ ಜಾಡು ಹಿಡಿದಿದ್ದಾರೆ. ಒಟ್ಟು 32 ಪ್ರಕರಣಗಳು ದಾಖಲಾಗಿದ್ದು, 27 ಪ್ರಕರಣಗಳನ್ನು ಪತ್ತೆಹಚ್ಚಿ 35 ಆರೋಪಿಗಳನ್ನು ಬಂಧಿಸಲಾಗಿದೆ. ಈ ಪ್ರಕರಣಗಳಿಗೆ ಸಂಬಂಧಿಸಿದಂತೆ ಒಟ್ಟು ₹1.22 ಕೋಟಿಗೂ ಅಧಿಕ ಮೌಲ್ಯದ ಹಣ ಹಾಗೂ ಸ್ವತ್ತಿನ ವಂಚನೆ ನಡೆದಿದ್ದು, ಅದರಲ್ಲಿ ₹37,13,942 ಮೌಲ್ಯದ ಸ್ವತ್ತನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಮೊಬೈಲ್ ಕಳವು ಹಾಗೂ ಕಳೆದುಹೋದ ಮೊಬೈಲ್‌ಗಳ ಪತ್ತೆಗೂ ಪೊಲೀಸರು ತಂತ್ರಜ್ಞಾನದ ನೆರವು ಪಡೆದಿದ್ದಾರೆ. CEIR (Central Equipment Identity Register) ವ್ಯವಸ್ಥೆ ಬಳಸಿಕೊಂಡು ಮೊಬೈಲ್‌ಗಳ ಜಾಡು ಪತ್ತೆಹಚ್ಚಲಾಗಿದೆ. ಒಟ್ಟು 1,440 ಮೊಬೈಲ್ ಪ್ರಕರಣಗಳಲ್ಲಿ 965 ಮೊಬೈಲ್‌ಗಳನ್ನು ಪತ್ತೆಹಚ್ಚಿ ವಶಪಡಿಸಿಕೊಳ್ಳಲಾಗಿದೆ. ಪತ್ತೆಯಾದ ಮೊಬೈಲ್‌ಗಳ ಒಟ್ಟು ಮೌಲ್ಯ ₹97,19,578 ಎಂದು ಪೊಲೀಸ್ ಇಲಾಖೆ ತಿಳಿಸಿದೆ.

ಒಂದು ವರ್ಷದ ಅವಧಿಯಲ್ಲಿ ನಡೆದ ಈ ಕಾರ್ಯಾಚರಣೆಯ ಅಂಕಿ-ಅಂಶಗಳು ಗಮನ ಸೆಳೆಯುವಂತಿವೆ. ಕಳವು, ಮೋಸ–ವಂಚನೆ ಹಾಗೂ ಮೊಬೈಲ್ ಪತ್ತೆ ಕಾರ್ಯಾಚರಣೆಗಳಲ್ಲಿ ಪೊಲೀಸರು ಕೋಟ್ಯಂತರ ರೂಪಾಯಿ ಮೌಲ್ಯದ ಸ್ವತ್ತುಗಳನ್ನು ಪತ್ತೆಹಚ್ಚಿದ್ದಾರೆ. ಕಳ್ಳರ ಕೈ ಸೇರಿದ್ದ ಚಿನ್ನ–ಬೆಳ್ಳಿ, ಕಳವಾದ ನಗದು, ವಾಹನಗಳು ಹಾಗೂ ಕಳೆದುಹೋದ ಮೊಬೈಲ್‌ಗಳು ಮತ್ತೆ ವಾರಸುದಾರರ ಕೈ ಸೇರಿವೆ.

ನಿರಂತರ ತನಿಖೆ, ತಾಂತ್ರಿಕ ನೆರವು ಹಾಗೂ ಪರಿಣಾಮಕಾರಿ ಕಾರ್ಯಾಚರಣೆಯ ಮೂಲಕ ಕಳವು ಮತ್ತು ವಂಚನೆ ಪ್ರಕರಣಗಳನ್ನು ಪತ್ತೆಹಚ್ಚುವಲ್ಲಿ ಗದಗ ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ. ಈ ಸಂದರ್ಭದಲ್ಲಿ ಡಿವೈಎಸ್ಪಿಗಳಾದ ಮುರ್ತುಜಾ ಖಾದ್ರಿ, ಸಜ್ಜನ, ಸೇರಿದಂತೆ ವಿವಿಧ ಪೊಲೀಸ್ ಠಾಣೆಗಳ ಅಧಿಕಾರಿಗಳು ಇದ್ದರು.

ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಸುಪ್ರೀಂ ಕೋರ್ಟ್ʼನಿಂದ ಬಿಗ್ ರಿಲೀಫ್!

0

ನವದೆಹಲಿ: ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧದ ಅಕ್ರಮ ಆಸ್ತಿ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಂತರ ಆದೇಶ ನೀಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್‌ನಲ್ಲಿ ನಡೆಯುತ್ತಿರುವ ವಿಚಾರಣೆಯನ್ನು ಮುಂದಿನ ಆದೇಶದವರೆಗೆ ಮುಂದುವರಿಸದಂತೆ ಸುಪ್ರೀಂ ಕೋರ್ಟ್ ಸೂಚಿಸಿದೆ. ಇದರಿಂದ ರಾಹುಲ್ ಗಾಂಧಿ ಅವರಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.

ಅಲ್ಲದೆ, ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್‌ಗೆ ಯಾವುದೇ ವರದಿ ಸಲ್ಲಿಸದಂತೆ ಸಿಬಿಐ ಮತ್ತು ಜಾರಿ ನಿರ್ದೇಶನಾಲಯಕ್ಕೂ ಸುಪ್ರೀಂ ಕೋರ್ಟ್ ಸೂಚಿಸಿದೆ.

ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಹಾಗೂ ನ್ಯಾಯಮೂರ್ತಿಗಳಾದ ಜೋಯ್ಮಲ್ಯ ಬಾಗ್ಚಿ ಮತ್ತು ವಿ. ಮೋಹನ್ ಅವರನ್ನೊಳಗೊಂಡ ಪೀಠ ಈ ವಿಚಾರಣೆ ನಡೆಸಿತು. ರಾಹುಲ್ ಗಾಂಧಿ ಪರ ಹಿರಿಯ ವಕೀಲ ಕಪಿಲ್ ಸಿಬಲ್ ವಾದ ಮಂಡಿಸಿದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕದ ನಿವಾಸಿ ಹಾಗೂ ಬಿಜೆಪಿ ಕಾರ್ಯಕರ್ತ ಎಸ್. ವಿಘ್ನೇಶ್ ಶಿಶಿರ್ ಸಲ್ಲಿಸಿರುವ ಅರ್ಜಿಯ ಹಿನ್ನೆಲೆಯಲ್ಲಿ ಹೈಕೋರ್ಟ್, ಸಿಬಿಐ ಮತ್ತು ಇಡಿಗೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದೆ.

ಅಲಹಾಬಾದ್ ಹೈಕೋರ್ಟ್ ಈ ಪ್ರಕರಣದ ಮುಂದಿನ ವಿಚಾರಣೆಯನ್ನು ಆಗಸ್ಟ್ 20ಕ್ಕೆ ನಿಗದಿಪಡಿಸಿರುವುದನ್ನು ಗಮನಿಸಿದ ಸುಪ್ರೀಂ ಕೋರ್ಟ್, ಮುಂದಿನ ಆದೇಶದವರೆಗೆ ಹೈಕೋರ್ಟ್‌ನಲ್ಲಿನ ವಿಚಾರಣೆಯನ್ನು ಮುಂದುವರಿಸದಂತೆ ಸೂಚಿಸಿದೆ.

ಇದೇ ವೇಳೆ ಪ್ರಕರಣದ ವಿಚಾರಣೆ ಅಲಹಾಬಾದ್ ಹೈಕೋರ್ಟ್‌ನಿಂದ ದೆಹಲಿ ಹೈಕೋರ್ಟ್‌ಗೆ ವರ್ಗಾಯಿಸುವಂತೆ ಕೋರಿ ರಾಹುಲ್ ಗಾಂಧಿ ಪ್ರತ್ಯೇಕ ಅರ್ಜಿಯನ್ನೂ ಸಲ್ಲಿಸಿದ್ದಾರೆ.

ಪ್ರಕರಣದ ಹಿನ್ನೆಲೆ ಏನು?

ರಾಹುಲ್ ಗಾಂಧಿ ಅವರು ತಮ್ಮ ಆದಾಯಕ್ಕೆ ಹೋಲಿಸಿದರೆ ಹೆಚ್ಚಿನ ಪ್ರಮಾಣದ ಆಸ್ತಿ ಹೊಂದಿದ್ದಾರೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತ ಎಸ್. ವಿಘ್ನೇಶ್ ಶಿಶಿರ್ ದೂರು ನೀಡಿದ್ದರು. ಈ ಆರೋಪದ ಕುರಿತು ತನಿಖೆ ನಡೆಸುವಂತೆ ಸಿಬಿಐ ಮತ್ತು ಜಾರಿ ನಿರ್ದೇಶನಾಲಯಕ್ಕೆ ಅಲಹಾಬಾದ್ ಹೈಕೋರ್ಟ್ ಸೂಚಿಸಿತ್ತು.

ಈ ವರ್ಷದ ಮೇ ತಿಂಗಳಲ್ಲಿ ನೀಡಿದ್ದ ಆದೇಶದಲ್ಲಿ, ರಾಹುಲ್ ಗಾಂಧಿ ವಿರುದ್ಧ ಮಾಡಲಾಗಿರುವ ಅಕ್ರಮ ಆಸ್ತಿ ಆರೋಪವನ್ನು ಪರಿಶೀಲಿಸುವಂತೆ ಹೈಕೋರ್ಟ್ ಸಿಬಿಐ ಮತ್ತು ಇಡಿಗೆ ನಿರ್ದೇಶನ ನೀಡಿತ್ತು. ಕಾನೂನಿನ ಅಡಿಯಲ್ಲಿ ಅನುಮತಿಸಬಹುದಾದ ಸೂಕ್ತ ಕ್ರಮಗಳನ್ನು ಅಧಿಕಾರಿಗಳು ಕೈಗೊಳ್ಳಬಹುದು ಎಂದು ಹೈಕೋರ್ಟ್ ತಿಳಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ರಾಹುಲ್ ಗಾಂಧಿ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದರು.

ವಿಚಾರಣೆ ವೇಳೆ ಸಿಬಿಐ-ಇಡಿಗೆ ಪ್ರಶ್ನೆ

ಸುಪ್ರೀಂ ಕೋರ್ಟ್ ವಿಚಾರಣೆ ವೇಳೆ ಪ್ರಕರಣದ ತನಿಖೆ ಹಾಗೂ ಅದರ ಮಾಹಿತಿ ಮಾಧ್ಯಮಗಳಲ್ಲಿ ಬಹಿರಂಗವಾದ ವಿಚಾರದ ಕುರಿತು ನ್ಯಾಯಪೀಠ ಪ್ರಶ್ನೆಗಳನ್ನು ಕೇಳಿತು.

ರಾಹುಲ್ ಗಾಂಧಿ ಪರ ವಾದ ಮಂಡಿಸಿದ ಕಪಿಲ್ ಸಿಬಲ್, ಪ್ರಕರಣದ ವಿಚಾರಣೆ ಹಾಗೂ ದಾಖಲೆಗಳು ಮಾಧ್ಯಮಗಳಿಗೆ ಹೇಗೆ ಸೋರಿಕೆಯಾದವು ಎಂಬುದರ ಬಗ್ಗೆ ನ್ಯಾಯಾಲಯ ಗಮನ ಹರಿಸಬೇಕು ಎಂದು ಮನವಿ ಮಾಡಿದರು.

ಸಿಬಿಐ ಪರ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್.ವಿ. ರಾಜು, ದೂರಿನ ಕುರಿತು ತನಿಖೆ ನಡೆಯುತ್ತಿದೆ ಎಂದು ನ್ಯಾಯಾಲಯಕ್ಕೆ ತಿಳಿಸಿದರು. ಈ ವೇಳೆ ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ, ತನಿಖೆಯನ್ನು ಸಿಬಿಐ ಸ್ವಯಂಪ್ರೇರಿತವಾಗಿ ಆರಂಭಿಸಿದೆಯೇ ಎಂದು ಪ್ರಶ್ನಿಸಿದರು. ಇದಕ್ಕೆ ಎಸ್.ವಿ. ರಾಜು ನಕಾರಾತ್ಮಕ ಉತ್ತರ ನೀಡಿದರು.

ಇದಾದ ಬಳಿಕ ಪ್ರಕರಣದಲ್ಲಿ ಹೈಕೋರ್ಟ್ ನೀಡಿರುವ ಆದೇಶದ ಸರಿಯಾದತೆಯನ್ನು ಪರಿಶೀಲಿಸಬೇಕಿದೆ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿತು. ಒಟ್ಟಿನಲ್ಲಿ, ರಾಹುಲ್ ಗಾಂಧಿ ವಿರುದ್ಧದ ಅಕ್ರಮ ಆಸ್ತಿ ಆರೋಪಕ್ಕೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್‌ನಲ್ಲಿನ ಮುಂದಿನ ವಿಚಾರಣೆಗೆ ಸುಪ್ರೀಂ ಕೋರ್ಟ್ ತಾತ್ಕಾಲಿಕ ತಡೆ ನೀಡಿದ್ದು, ಪ್ರಕರಣದ ಮುಂದಿನ ಬೆಳವಣಿಗೆ ಕುತೂಹಲ ಮೂಡಿಸಿದೆ.