ಬೆಂಗಳೂರು: ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (SIR) ಪ್ರಕ್ರಿಯೆ ನಡೆಯುತ್ತಿರುವ ಬೆನ್ನಲ್ಲೇ ನಟ ಪ್ರಕಾಶ್ ರಾಜ್ ಅವರ ಹೆಸರು ಮತದಾರರ ಪಟ್ಟಿಯಿಂದ ಕೈಬಿಟ್ಟಿರುವ ವಿಚಾರ ವಿವಾದಕ್ಕೆ ಕಾರಣವಾಗಿದೆ. ತಮ್ಮ ಹೆಸರು ಡಿಲೀಟ್ ಆಗಿರುವುದನ್ನು ಪ್ರಶ್ನಿಸಿ ಪ್ರಕಾಶ್ ರಾಜ್ ವಿಡಿಯೋ ಮೂಲಕ ಆಕ್ಷೇಪ ವ್ಯಕ್ತಪಡಿಸಿದ ಬೆನ್ನಲ್ಲೇ, ಚುನಾವಣಾ ಆಯೋಗದ ಅಧಿಕಾರಿಗಳು ಈ ಕುರಿತು ಸ್ಪಷ್ಟನೆ ನೀಡಿದ್ದಾರೆ.
ರಾಜ್ಯಾದ್ಯಂತ ಮತದಾರರ ಪಟ್ಟಿಯ ಪರಿಷ್ಕರಣೆ ಪ್ರಕ್ರಿಯೆ ನಡೆಯುತ್ತಿದ್ದು, ಅಕ್ರಮ ಹಾಗೂ ಗೊಂದಲಭರಿತ ಮತದಾರರ ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕಲಾಗುತ್ತಿದೆ. ಬೆಂಗಳೂರಿನಲ್ಲಿ ಸುಮಾರು 65 ಲಕ್ಷ ಮತದಾರರ ಹೆಸರು ಪಟ್ಟಿಯಿಂದ ಡಿಲೀಟ್ ಆಗಿರುವ ಮಾಹಿತಿ ಇದೆ.
ಆಗಸ್ಟ್ 11ರಂದು ವಿಡಿಯೋ ಹಂಚಿಕೊಂಡಿದ್ದ ಪ್ರಕಾಶ್ ರಾಜ್, ತಾವು ಹುಟ್ಟಿ ಬೆಳೆದ, ಶಿಕ್ಷಣ ಪಡೆದ ಹಾಗೂ ಈ ಹಿಂದೆ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿದ್ದ ಕ್ಷೇತ್ರದಲ್ಲೇ ತಮ್ಮ ಹೆಸರು ಮತದಾರರ ಪಟ್ಟಿಯಿಂದ ಹೇಗೆ ಡಿಲೀಟ್ ಆಗಲು ಸಾಧ್ಯ ಎಂದು ಪ್ರಶ್ನಿಸಿದ್ದರು. ಈ ಬೆಳವಣಿಗೆಯನ್ನು ‘ಒಂದು ಜೋಕ್’ ಎಂದು ವ್ಯಂಗ್ಯವಾಡಿದ್ದ ಅವರು, ತಮ್ಮ ಮತದಾನದ ಹಕ್ಕನ್ನು ಮರಳಿ ಪಡೆಯಲು ಅಗತ್ಯವಿರುವ ಎಲ್ಲ ಕಾನೂನು ಕ್ರಮಗಳನ್ನು ಕೈಗೊಳ್ಳುವುದಾಗಿ ಹೇಳಿದ್ದರು.
ಪ್ರಕಾಶ್ ರಾಜ್ ಅವರ ಆರೋಪಕ್ಕೆ ಪ್ರತಿಕ್ರಿಯಿಸಿರುವ ಚುನಾವಣಾಧಿಕಾರಿಗಳು, ಅವರು ಶಾಂತಿನಗರದ ಮತದಾರರಾಗಿದ್ದರು. ಆದರೆ SIR ಪ್ರಕ್ರಿಯೆಯಡಿ ನಡೆದ ಮನೆ-ಮನೆ ಪರಿಶೀಲನೆ ವೇಳೆ ಅವರು ತಮ್ಮ ನೋಂದಾಯಿತ ನಿವಾಸವಾದ ನಂಬರ್ 266, ಗಾರ್ಡನ್ ಅಪಾರ್ಟ್ಮೆಂಟ್ನಿಂದ ಸ್ಥಳಾಂತರಗೊಂಡಿರುವುದು ಪತ್ತೆಯಾಗಿದೆ ಎಂದು ತಿಳಿಸಿದ್ದಾರೆ.
ಸ್ಥಳೀಯವಾಗಿ ಬೂತ್ ಮಟ್ಟದ ಅಧಿಕಾರಿ (BLO) ವಿಚಾರಣೆ ನಡೆಸಿದಾಗ, ಪ್ರಕಾಶ್ ರಾಜ್ ಅವರು ಕಳೆದ ನಾಲ್ಕು ವರ್ಷಗಳಿಂದ ಆ ನಿವಾಸದಲ್ಲಿ ವಾಸಿಸುತ್ತಿಲ್ಲ. ಬದಲಾಗಿ ಅಲ್ಲಿ ಬಾಡಿಗೆದಾರರು ವಾಸಿಸುತ್ತಿದ್ದಾರೆ ಎಂಬ ಮಾಹಿತಿ ದೊರೆತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
BLO ನೀಡಿದ ಮಾಹಿತಿಯ ಆಧಾರದ ಮೇಲೆ ಸ್ಥಳ ಪರಿಶೀಲನೆ ನಡೆಸಲಾಗಿದ್ದು, ನಿಗದಿತ ವಿಳಾಸದಲ್ಲಿ ಪ್ರಕಾಶ್ ರಾಜ್ ಅವರು ದೀರ್ಘಕಾಲದಿಂದ ವಾಸಿಸುತ್ತಿಲ್ಲ ಎಂಬ ಕಾರಣಕ್ಕೆ ಅವರ ಹೆಸರನ್ನು ಶಾಶ್ವತವಾಗಿ ಸ್ಥಳಾಂತರಗೊಂಡ ಮತದಾರರ ಪಟ್ಟಿಗೆ (ASDDO) ಸೇರಿಸಲಾಗಿದೆ ಎಂದು ಚುನಾವಣಾಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
ಈ ಕುರಿತು ಪ್ರಕಾಶ್ ರಾಜ್ ಅವರೊಂದಿಗೆ ದೂರವಾಣಿ ಮೂಲಕವೂ ಮಾತನಾಡಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಈ ವೇಳೆ ತಾವು ಶಾಂತಿನಗರದಲ್ಲೇ ಬೇರೆ ಸ್ಥಳದಲ್ಲಿ ವಾಸಿಸುತ್ತಿರುವುದಾಗಿ ಪ್ರಕಾಶ್ ರಾಜ್ ತಿಳಿಸಿದ್ದಾರೆ ಎನ್ನಲಾಗಿದೆ.
ಹೀಗಾಗಿ, ಅವರು ಸ್ಥಳೀಯ BLO ಅವರನ್ನು ಸಂಪರ್ಕಿಸಿ ಫಾರ್ಮ್-6 ಸಲ್ಲಿಸಿದರೆ ಶಾಂತಿನಗರದ ಮತದಾರರ ಪಟ್ಟಿಯಲ್ಲಿ ಮತ್ತೆ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು ಎಂದು ಚುನಾವಣಾಧಿಕಾರಿಗಳು ಮಾಹಿತಿ ನೀಡಿದ್ದಾರೆ.
ತಮ್ಮ ಹೆಸರು ಮತದಾರರ ಪಟ್ಟಿಯಿಂದ ಕೈಬಿಟ್ಟಿರುವ ಕುರಿತು ವಿಡಿಯೋ ಹಂಚಿಕೊಂಡಿದ್ದ ಪ್ರಕಾಶ್ ರಾಜ್, ತಮಗೆ ಮತ ಹಾಕದವರಿಗೆ ಮತದಾನದ ಹಕ್ಕಿನಿಂದಲೇ ವಂಚಿಸಲಾಗುತ್ತಿದೆ ಎಂದು ಆರೋಪಿಸಿದ್ದರು. ಇದೀಗ ಚುನಾವಣಾಧಿಕಾರಿಗಳ ಸ್ಪಷ್ಟನೆಯೊಂದಿಗೆ ಪ್ರಕಾಶ್ ರಾಜ್ ಅವರ ಹೆಸರು ಪಟ್ಟಿಯಿಂದ ಕೈಬಿಟ್ಟಿರುವುದರ ಹಿಂದಿನ ಕಾರಣದ ಬಗ್ಗೆ ಉಂಟಾಗಿದ್ದ ಗೊಂದಲಕ್ಕೆ ತೆರೆ ಬಿದ್ದಿದೆ.

