Home Blog

ಎನ್‌ಎಂಎಂಎಸ್‌ ಹಾಜರಾತಿ ಇಲ್ಲದಿದ್ದರೆ ಕೂಲಿಗೆ ಕತ್ತರಿ

0

ವಿಜಯಸಾಕ್ಷಿ ಸುದ್ದಿ, ಗದಗ: ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜಗಾರ್ ಮತ್ತು ಅಜೀವಿಕಾ ಮಿಷನ್ (ವಿಬಿಜಿ–ರಾಮ್‌ಜಿ) ಯೋಜನೆಯಡಿ ಅಕುಶಲ ಕೂಲಿಕಾರರಿಗೆ ದಿನಕ್ಕೆ ₹382 ಕೂಲಿ ನೀಡಲಾಗುತ್ತಿದ್ದು, ಗ್ರಾಮೀಣ ಪ್ರದೇಶದ ಅರ್ಹ ಕೂಲಿಕಾರರು ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಾಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ (ಗ್ರಾಮೀಣ ಉದ್ಯೋಗ) ಕುಮಾರ ಪೂಜಾರ ಹೇಳಿದರು.

ಗದಗ ತಾಲೂಕಿನ ಯಲಿಶಿರೂರ ಗ್ರಾಮದಲ್ಲಿ ವಿಬಿಜಿ–ರಾಮ್‌ಜಿ ಯೋಜನೆಯಡಿ ನಡೆಯುತ್ತಿರುವ ಸಮುದಾಯ ಕಾಮಗಾರಿಗಳನ್ನು ಪರಿಶೀಲಿಸಿ ಮಾತನಾಡಿದ ಅವರು, ಕಾಮಗಾರಿಗಳಲ್ಲಿ ಭಾಗವಹಿಸುವ ಎಲ್ಲ ಕೂಲಿಕಾರರ ಹಾಜರಾತಿಯನ್ನು ಎನ್‌ಎಂಎಂಎಸ್‌ (NMMS) ತಂತ್ರಾಂಶದಲ್ಲಿ ಪ್ರತಿದಿನ ಎರಡು ಬಾರಿ ಕಡ್ಡಾಯವಾಗಿ ದಾಖಲಿಸಬೇಕು ಎಂದು ಸೂಚಿಸಿದರು.

ಕಾಯಕ ಬಂಧುಗಳು ಹಾಗೂ ಕೂಲಿಕಾರರು ಬೆಳಿಗ್ಗೆ 6 ಗಂಟೆಗೆ ಕೆಲಸಕ್ಕೆ ಹಾಜರಾಗಬೇಕು. ಕೂಲಿ ಮೊತ್ತ ₹382ಕ್ಕೆ ಹೆಚ್ಚಳವಾಗಿದ್ದು, ಅಳತೆಗೆ ಅನುಗುಣವಾಗಿ ಕೆಲಸ ಮಾಡಿದರೆ ಮಾತ್ರ ಪೂರ್ಣ ಕೂಲಿ ದೊರೆಯುತ್ತದೆ ಎಂದು ತಿಳಿಸಿದರು.

ವಿಬಿಜಿ–ರಾಮ್‌ಜಿ ಯೋಜನೆಯಡಿ ಗ್ರಾಮೀಣ ಬಡ ಅಕುಶಲ ಕಾರ್ಮಿಕರಿಗೆ ಸ್ಥಳೀಯ ಮಟ್ಟದಲ್ಲೇ ಉದ್ಯೋಗ ಒದಗಿಸಲಾಗುತ್ತಿದೆ. ಕೆರೆ ಅಭಿವೃದ್ಧಿಯಂತಹ ಕಾಮಗಾರಿಗಳಿಂದ ಅಂತರ್ಜಲ ಮಟ್ಟವೂ ಹೆಚ್ಚಳವಾಗಲಿದೆ. ಯೋಜನೆಯಡಿ ಉದ್ಯೋಗ ಚೀಟಿ ಹೊಂದಿರುವ ಪ್ರತಿ ಕುಟುಂಬಕ್ಕೆ ವರ್ಷಕ್ಕೆ 125 ದಿನಗಳ ಉದ್ಯೋಗ ನೀಡಲಾಗುತ್ತಿದ್ದು, ಪುರುಷ–ಮಹಿಳೆ ಎಂಬ ಭೇದವಿಲ್ಲದೆ ಸಮಾನ ಕೂಲಿ ನೀಡಲಾಗುತ್ತಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶಿವಕುಮಾರ ವಾಲಿ, ತಾಪಂ ಐಇಸಿ ಸಂಯೋಜಕ ವೀರೇಶ ಬಸನಗೌಡ್ರ, ತಾಂತ್ರಿಕ ಸಹಾಯಕ ಮಂಜುನಾಥ ತಳವಾರ, ಬಿಲ್ ಕಲೆಕ್ಟರ್ ಪ್ರಕಾಶ ಬೋರಾಣಿ, ಬಿಎಫ್‌ಟಿ ದುರ್ಗಪ್ಪ ಆಲೂರ, ಕಾಯಕ ಬಂಧುಗಳು ಹಾಗೂ ಕೂಲಿಕಾರರು ಉಪಸ್ಥಿತರಿದ್ದರು.

ಮಹಿಳೆಯರಿಲ್ಲದ ಸಚಿವ ಸಂಪುಟಕ್ಕೆ ಆಕ್ರೋಶ

0

ವಿಜಯಸಾಕ್ಷಿ ಸುದ್ದಿ, ಹಗರಿಬೊಮ್ಮನಹಳ್ಳಿ: ರಾಜ್ಯ ಸಚಿವ ಸಂಪುಟದಲ್ಲಿ ಒಬ್ಬ ಮಹಿಳಾ ಶಾಸಕರಿಗೂ ಸಚಿವ ಸ್ಥಾನ ನೀಡದಿರುವುದನ್ನು ಖಂಡಿಸಿ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸರ್ದಾರ್ ಹುಲಿಗೆಮ್ಮ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪತ್ರಿಕಾ ಹೇಳಿಕೆ ನೀಡಿರುವ ಅವರು, ಮಹಿಳೆಯರಿಲ್ಲದ ಸಚಿವ ಸಂಪುಟ ರಚನೆ ಮಹಿಳಾ ವಿರೋಧಿ ಮನೋಭಾವದ ಪ್ರತೀಕವಾಗಿದ್ದು, ಸಂವಿಧಾನಬದ್ಧ ಸಮಾನತೆ ಹಾಗೂ ಪ್ರಜಾಪ್ರಭುತ್ವದ ಮೌಲ್ಯಗಳಿಗೆ ವಿರುದ್ಧವಾದ ಕ್ರಮವಾಗಿದೆ ಎಂದು ಆರೋಪಿಸಿದರು.

ರಾಜ್ಯದ ಒಟ್ಟು ಮತದಾರರಲ್ಲಿ ಶೇ.52ರಷ್ಟು ಮಹಿಳೆಯರಿದ್ದು, ಸರ್ಕಾರ ರಚನೆಯಲ್ಲಿ ಮಹಿಳೆಯರ ಪಾತ್ರ ನಿರ್ಣಾಯಕವಾಗಿದೆ. ಶಿಕ್ಷಣ, ಆರೋಗ್ಯ, ಕೃಷಿ, ಉದ್ಯೋಗ ಹಾಗೂ ಮಹಿಳಾ-ಮಕ್ಕಳ ಕಲ್ಯಾಣ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿ ಮಹಿಳೆಯರ ಕೊಡುಗೆ ಮಹತ್ವದ್ದಾಗಿದ್ದರೂ ಸಚಿವ ಸಂಪುಟದಲ್ಲಿ ಅವರಿಗೆ ಅವಕಾಶ ನೀಡದಿರುವುದು ಮಹಿಳೆಯರನ್ನು ರಾಜಕೀಯ ನಿರ್ಧಾರ ಪ್ರಕ್ರಿಯೆಯಿಂದ ದೂರವಿಡುವ ಪ್ರಯತ್ನವಾಗಿದೆ ಎಂದು ದೂರಿದರು.

2023ರ ವಿಧಾನಸಭಾ ಚುನಾವಣೆಯಲ್ಲಿ ಆಯ್ಕೆಯಾದ 10 ಮಹಿಳಾ ಶಾಸಕರಲ್ಲಿ ಕಾಂಗ್ರೆಸ್‌ನ ನಾಲ್ವರು ಶಾಸಕರಿಗೂ ಸಚಿವ ಸ್ಥಾನ ನೀಡದಿರುವುದು ಪಕ್ಷದ ಮಹಿಳಾ ಸಮಾನತೆಯ ಬದ್ಧತೆಯನ್ನೇ ಪ್ರಶ್ನಿಸುವಂತಾಗಿದೆ ಎಂದು ಹೇಳಿದರು.

ಸಂಸತ್ತು ಹಾಗೂ ವಿಧಾನಸಭೆಗಳಲ್ಲಿ ಶೇ.33ರಷ್ಟು ಮಹಿಳಾ ಮೀಸಲಾತಿ ಜಾರಿಗೆ ಮಹಿಳಾ ಸಂಘಟನೆಗಳು ಹೋರಾಟ ನಡೆಸುತ್ತಿರುವ ಸಂದರ್ಭದಲ್ಲಿ ಕರ್ನಾಟಕ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಸ್ಥಾನ ನೀಡದಿರುವುದು ಮಹಿಳಾ ಸಬಲೀಕರಣಕ್ಕೆ ವಿರುದ್ಧವಾದ ನಡೆ ಎಂದು ಟೀಕಿಸಿದರು.

ಸಚಿವ ಸಂಪುಟದ ನಿರ್ಧಾರವನ್ನು ಮರುಪರಿಶೀಲಿಸಿ ಮಹಿಳೆಯರಿಗೆ ಸೂಕ್ತ ಹಾಗೂ ನ್ಯಾಯಯುತ ಪ್ರಾತಿನಿಧ್ಯ ನೀಡಬೇಕು ಎಂದು ಸಂಘಟನೆ ಸರ್ಕಾರ ಮತ್ತು ಕಾಂಗ್ರೆಸ್ ಹೈಕಮಾಂಡ್ ಅನ್ನು ಆಗ್ರಹಿಸಿದೆ.

ನಾಳೆ ಜಿಲ್ಲೆಯಲ್ಲಿ ಸಚಿವ ಬಸವರಾಜ ರಾಯರಡ್ಡಿ ಪ್ರವಾಸ

0

ವಿಜಯಸಾಕ್ಷಿ ಸುದ್ದಿ, ಗದಗ: ರಾಜ್ಯದ ಸಂಪುಟ ದರ್ಜೆ ಸಚಿವ ಬಸವರಾಜ ರಾಯರಡ್ಡಿ ಅವರು ಆಗಸ್ಟ್ 7ರಿಂದ 9ರವರೆಗೆ ಗದಗ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡು, ಬರ ಪರಿಸ್ಥಿತಿ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿ ರೈತರೊಂದಿಗೆ ಸಂವಾದ ನಡೆಸಲಿದ್ದಾರೆ.

ಆಗಸ್ಟ್ 7ರಂದು ಬೆಳಿಗ್ಗೆ 10.30ಕ್ಕೆ ಗದಗ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಲಿರುವ ಸಚಿವರು, ಬಳಿಕ ಜಿಲ್ಲಾಧಿಕಾರಿ ಕಚೇರಿಯಲ್ಲಿ ಬರ ಪರಿಸ್ಥಿತಿ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ಮಧ್ಯಾಹ್ನ ರೈತರೊಂದಿಗೆ ಬರಪೀಡಿತ ಪ್ರದೇಶಗಳ ವೀಕ್ಷಣೆ ನಡೆಸಿ, ಬಳಿಕ ಮುಂಡರಗಿ ತಾಲೂಕಿನಲ್ಲಿ ಅಧಿಕಾರಿಗಳು ಹಾಗೂ ರೈತರೊಂದಿಗೆ ಸಭೆ ನಡೆಸಿ ಬರಪೀಡಿತ ಪ್ರದೇಶಗಳನ್ನು ಪರಿಶೀಲಿಸಲಿದ್ದಾರೆ.

ಆಗಸ್ಟ್ 8ರಂದು ಶಿರಹಟ್ಟಿ ಹಾಗೂ ಲಕ್ಷ್ಮೇಶ್ವರ ತಾಲೂಕುಗಳಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ರೈತರೊಂದಿಗೆ ಬರಪೀಡಿತ ಪ್ರದೇಶಗಳ ವೀಕ್ಷಣೆ ನಡೆಸಲಿದ್ದಾರೆ. ಬಳಿಕ ರೋಣ ಹಾಗೂ ಗಜೇಂದ್ರಗಡ ತಾಲೂಕುಗಳಲ್ಲಿಯೂ ಇದೇ ರೀತಿಯ ಸಭೆ ಹಾಗೂ ಸ್ಥಳ ಪರಿಶೀಲನೆ ನಡೆಸಿ ಧಾರವಾಡದಲ್ಲಿ ವಾಸ್ತವ್ಯ ಮಾಡಲಿದ್ದಾರೆ.

ಆಗಸ್ಟ್ 9ರಂದು ನರಗುಂದ ತಾಲೂಕಿನಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ರೈತರೊಂದಿಗೆ ಬರಪೀಡಿತ ಪ್ರದೇಶಗಳ ವೀಕ್ಷಣೆ ನಡೆಸಲಿದ್ದಾರೆ.

ಸಚಿವರ ಪ್ರವಾಸದ ಸಂದರ್ಭದಲ್ಲಿ ಸರ್ಕಾರಿ ಕಚೇರಿಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಹಾರ, ಸನ್ಮಾನ ಸೇರಿದಂತೆ ಯಾವುದೇ ಗೌರವ ಸಮಾರಂಭಗಳನ್ನು ಆಯೋಜಿಸಬಾರದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ನೀರಿನ ಸಮಸ್ಯೆಗೆ ಅವಕಾಶ ಕೊಡಬೇಡಿ: ಸಚಿವ ಸಂತೋಷ್ ಎಸ್. ಲಾಡ್

0

ವಿಜಯಸಾಕ್ಷಿ ಸುದ್ದಿ, ಧಾರವಾಡ: ಮುಂಗಾರು ವೈಫಲ್ಯದ ಹಿನ್ನೆಲೆಯಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಅಧಿಕಾರಿಗಳು ಈಗಿನಿಂದಲೇ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು ಎಂದು ಸಂಪುಟ ದರ್ಜೆ ಸಚಿವ ಸಂತೋಷ್ ಎಸ್. ಲಾಡ್ ಸೂಚಿಸಿದರು.

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಬುಧವಾರ ನಡೆದ ಜಿಲ್ಲಾ ಮಟ್ಟದ ಬರ ಪರಿಸ್ಥಿತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕಲಘಟಗಿ ತಾಲೂಕಿನ ವಿವಿಧ ಗ್ರಾಮಗಳಿಗೆ ಈಗಾಗಲೇ ಭೇಟಿ ನೀಡಿದ್ದು, ಗುರುವಾರ ನವಲಗುಂದ, ಅಣ್ಣಿಗೇರಿ ಹಾಗೂ ಕುಂದಗೋಳ, ಆಗಸ್ಟ್ 7ರಂದು ಅಳ್ನಾವರ ತಾಲೂಕಿನ ಬರಪೀಡಿತ ಗ್ರಾಮಗಳಿಗೆ ಭೇಟಿ ನೀಡಿ ಪರಿಸ್ಥಿತಿ ಪರಿಶೀಲಿಸಲಾಗುವುದು ಎಂದು ತಿಳಿಸಿದರು.

ಬೆಳೆ ಸಮೀಕ್ಷೆ ಕಾರ್ಯವನ್ನು ಶೀಘ್ರ ಪೂರ್ಣಗೊಳಿಸಿ, ರೈತರಿಗೆ ಸರ್ಕಾರದ ಯೋಜನೆಗಳ ಲಾಭ ತಲುಪುವಂತೆ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಸ್ನೇಹಲ್ ಆರ್. ಮಾಹಿತಿ ನೀಡಿ, ಜೂನ್ 1ರಿಂದ ಆಗಸ್ಟ್ 5ರವರೆಗೆ ಜಿಲ್ಲೆಯಲ್ಲಿ ವಾಡಿಕೆಯ 299.7 ಮಿ.ಮೀ. ಮಳೆಯ ಬದಲಿಗೆ 196.2 ಮಿ.ಮೀ. ಮಾತ್ರ ಮಳೆಯಾಗಿದ್ದು, ಶೇ.35ರಷ್ಟು ಮಳೆ ಕೊರತೆ ದಾಖಲಾಗಿದೆ ಎಂದರು.

ಜಿಲ್ಲೆಯಲ್ಲಿ ಕೃಷಿ ಬೆಳೆಗಳ 2.71 ಲಕ್ಷ ಹೆಕ್ಟೇರ್ (ಶೇ.96) ಹಾಗೂ ತೋಟಗಾರಿಕೆ ಬೆಳೆಗಳ 16,825 ಹೆಕ್ಟೇರ್ (ಶೇ.74) ಪ್ರದೇಶದಲ್ಲಿ ಬಿತ್ತನೆಯಾಗಿದೆ. ರೈತರಿಗೆ ಅಗತ್ಯ ಪ್ರಮಾಣದ ಬೀಜ ಹಾಗೂ ರಸಗೊಬ್ಬರ ದಾಸ್ತಾನು ಲಭ್ಯವಿದ್ದು, ಯಾವುದೇ ಕೊರತೆ ಇಲ್ಲ ಎಂದು ವಿವರಿಸಿದರು.

ಪ್ರಸ್ತುತ 16 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕಂಡುಬಂದಿದ್ದು, 18 ಖಾಸಗಿ ಕೊಳವೆಬಾವಿಗಳ ಮೂಲಕ ನೀರು ಪೂರೈಕೆ ಮಾಡಲಾಗುತ್ತಿದೆ. ಜಾನುವಾರುಗಳಿಗೆ 43 ವಾರಗಳಿಗೆ ಸಾಕಾಗುವಷ್ಟು ಮೇವು ಲಭ್ಯವಿದ್ದು, ಮುನ್ನೆಚ್ಚರಿಕೆಯಾಗಿ 7 ಮೇವು ಬ್ಯಾಂಕ್‌ಗಳನ್ನು ತೆರೆಯಲು ಸ್ಥಳ ಗುರುತಿಸಲಾಗಿದೆ ಎಂದು ತಿಳಿಸಿದರು.

“ಬರ ಪರಿಸ್ಥಿತಿಯನ್ನು ಲಘುವಾಗಿ ಪರಿಗಣಿಸಬೇಡಿ. ಯಾವುದೇ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಅಧಿಕಾರಿಗಳು ಮುಂಚಿತವಾಗಿ ಕ್ರಮ ಕೈಗೊಳ್ಳಬೇಕು.”

ಸಂತೋಷ ಲಾಡ್, ಸಂಪುಟ ದರ್ಜೆ ಸಚಿವ

ರೈತರ ಆಕ್ರೋಶಕ್ಕೆ ಕೊನೆಗೂ ಕರಗಿದ ಡಿಸಿ

0

ವಿಜಯಸಾಕ್ಷಿ ಸುದ್ದಿ, ಗದಗ: ರೈತರೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪದಿಂದ ತೀವ್ರ ಟೀಕೆಗೆ ಗುರಿಯಾಗಿದ್ದ ಗದಗ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಅವರು ಕೊನೆಗೂ ಸಾವಿರಾರು ರೈತರ ಆಕ್ರೋಶದ ಮುಂದೆ, ಜಿಟಿಜಿಟಿ ಮಳೆಯ ನಡುವೆಯೇ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ಬಹಿರಂಗವಾಗಿ ಕ್ಷಮೆಯಾಚಿಸಿದರು. ರೈತರ ನ್ಯಾಯಯುತ ಬೇಡಿಕೆಗಳನ್ನು ಸರ್ಕಾರದ ಗಮನಕ್ಕೆ ತಂದು ಪರಿಹಾರ ಕಲ್ಪಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು.

2025-26ನೇ ಸಾಲಿನ ಬೆಳೆ ವಿಮೆ ಬಿಡುಗಡೆ ಹಾಗೂ ಮಳೆ ಕೊರತೆಯಿಂದ ಬೆಳೆ ಹಾನಿಗೊಳಗಾದ ರೈತರಿಗೆ ಪರಿಹಾರ ನೀಡುವಂತೆ ಒತ್ತಾಯಿಸಿ ಕೆಲ ದಿನಗಳ ಹಿಂದೆ ಜಿಲ್ಲಾಧಿಕಾರಿಗಳನ್ನು ಭೇಟಿಯಾಗಿದ್ದ ರೈತರೊಂದಿಗೆ ಅವರು ಏಕವಚನದಲ್ಲಿ ಮಾತನಾಡಿದ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿತ್ತು. ಇದರ ಬೆನ್ನಲ್ಲೇ ಜಿಲ್ಲೆಯ ಸಮಗ್ರ ರೈತ ಸಂಘಟನೆಗಳ ಒಕ್ಕೂಟದ ಆಶ್ರಯದಲ್ಲಿ ಬುಧವಾರ ಬೃಹತ್ ಪ್ರತಿಭಟನೆ ನಡೆಯಿತು.

ಜಿಲ್ಲೆಯ ವಿವಿಧ ಭಾಗಗಳಿಂದ ಸಾವಿರಾರು ರೈತರು ಟ್ರ್ಯಾಕ್ಟರ್, ಚಕ್ಕಡಿ ಗಾಡಿ, ಟಂಟಂ ಹಾಗೂ ಎತ್ತಿನ ಬಂಡಿಗಳಲ್ಲಿ ಗದಗಕ್ಕೆ ಆಗಮಿಸಿದರು. ಚನ್ನಮ್ಮ ವೃತ್ತದಿಂದ ಮುಳಗುಂದ ನಾಕಾವರೆಗೆ ಪಾದಯಾತ್ರೆ ನಡೆಸಿ ಮಾನವ ಸರಪಳಿ ನಿರ್ಮಿಸಿದರು. ಬಳಿಕ ಜಿಲ್ಲಾಧಿಕಾರಿ ಕಚೇರಿಯತ್ತ ಮೆರವಣಿಗೆ ನಡೆಸಿದ ವೇಳೆ ಪೊಲೀಸರು ಬ್ಯಾರಿಕೇಡ್ ಹಾಕಿ ತಡೆದ ಹಿನ್ನೆಲೆಯಲ್ಲಿ ರೈತರು ಗದಗ–ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿಯಲ್ಲೇ ಕುಳಿತು ರಸ್ತೆ ತಡೆ ನಡೆಸಿದರು.

ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಹೆದ್ದಾರಿ ಸಂಚಾರ ಸಂಪೂರ್ಣ ಸ್ಥಗಿತಗೊಂಡು ವಾಹನಗಳ ಸಾಲು ಮೈಲುಗಟ್ಟಲೆ ನಿಂತಿತು. “ಜಿಲ್ಲಾಧಿಕಾರಿಗಳು ಖುದ್ದಾಗಿ ಬಂದು ಕ್ಷಮೆ ಕೇಳುವವರೆಗೂ ಪ್ರತಿಭಟನೆ ಹಿಂಪಡೆಯುವುದಿಲ್ಲ” ಎಂದು ರೈತರು ಪಟ್ಟು ಹಿಡಿದರು.

ಕೊನೆಗೆ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್, “ರೈತರೊಂದಿಗೆ ಒರಟಾಗಿ ಮಾತನಾಡಿದ್ದೇನೆ. ನನ್ನ ಮಾತಿನಿಂದ ಯಾರಿಗಾದರೂ ನೋವಾಗಿದ್ದರೆ ಕ್ಷಮೆ ಕೋರುತ್ತೇನೆ. ರೈತರ ಬೆಳೆ ವಿಮೆ ಹಾಗೂ ಪರಿಹಾರ ಸೇರಿದಂತೆ ನ್ಯಾಯಯುತ ಬೇಡಿಕೆಗಳನ್ನು ಸರ್ಕಾರದ ಗಮನಕ್ಕೆ ತಂದು ಈಡೇರಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇನೆ” ಎಂದು ಬಹಿರಂಗವಾಗಿ ಹೇಳಿದರು.

ಜಿಲ್ಲಾಧಿಕಾರಿಗಳ ಕ್ಷಮೆಯಾಚನೆಯ ಬಳಿಕ ರೈತರು ಪ್ರತಿಭಟನೆ ಹಿಂಪಡೆದು ಧರಣಿಗೆ ತೆರೆ ಎಳೆದರು.

“ರೈತರ ಮನಸ್ಸಿಗೆ ನೋವಾಗುವಂತೆ ಮಾತನಾಡಿದ್ದರೆ ಕ್ಷಮೆ ಕೋರುತ್ತೇನೆ. ರೈತರ ನ್ಯಾಯಯುತ ಬೇಡಿಕೆಗಳನ್ನು ಸರ್ಕಾರದ ಗಮನಕ್ಕೆ ತಂದು ಈಡೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ.”

ಸಿ.ಎನ್. ಶ್ರೀಧರ್, ಜಿಲ್ಲಾಧಿಕಾರಿ, ಗದಗ

ಮಳೆಯಲ್ಲೂ ಕರ್ತವ್ಯ ನಿರ್ವಹಿಸಿದ ಎಸ್‌ಪಿ

ಪ್ರತಿಭಟನೆ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್ ಅವರ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಸುರಿಯುತ್ತಿದ್ದ ಮಳೆಯಲ್ಲೇ ಎಸ್‌ಪಿ ಪ್ರತಿಭಟನಾಕಾರರ ನಡುವೆ ನಿಂತು ಪರಿಸ್ಥಿತಿಯನ್ನು ನಿಯಂತ್ರಿಸಿ, ಜಿಲ್ಲಾಧಿಕಾರಿ ಮತ್ತು ರೈತರ ನಡುವಿನ ಮಾತುಕತೆಗೆ ದಾರಿ ಮಾಡಿಕೊಟ್ಟಿದ್ದು ಗಮನ ಸೆಳೆಯಿತು.

ತಾಯಿ ಎದೆಹಾಲೇ ಮಗುವಿನ ಮೊದಲ ರೋಗನಿರೋಧಕ ಶಕ್ತಿ

0

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಮಗುವಿನ ಆರೋಗ್ಯಕರ ಬೆಳವಣಿಗೆಗೆ ತಾಯಿ ಎದೆಹಾಲು ಅತ್ಯಂತ ಅವಶ್ಯಕವಾಗಿದ್ದು, ಜನನದ ಮೊದಲ ಒಂದು ಗಂಟೆಯೊಳಗೆ ಸ್ತನ್ಯಪಾನ ಆರಂಭಿಸಿ, ಕನಿಷ್ಠ ಆರು ತಿಂಗಳವರೆಗೆ ಕಡ್ಡಾಯವಾಗಿ ತಾಯಿ ಎದೆಹಾಲನ್ನೇ ನೀಡಬೇಕು ಎಂದು ಉಪಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಎಸ್.ಎಫ್. ಹನಕನಹಳ್ಳಿ ಹೇಳಿದರು.

ತಾಲೂಕಿನ ಶಿಗ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಬುಧವಾರ ವಿಶ್ವ ಸ್ತನ್ಯಪಾನ ಸಪ್ತಾಹ ಅಂಗವಾಗಿ ಆಯೋಜಿಸಿದ್ದ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ತಾಯಿ ಎದೆಹಾಲಿನಷ್ಟು ಪೌಷ್ಟಿಕಾಂಶಯುಕ್ತ ಆಹಾರ ಮತ್ತೊಂದಿಲ್ಲ. ಇದು ಮಗುವಿನ ದೈಹಿಕ ಹಾಗೂ ಮಾನಸಿಕ ಬೆಳವಣಿಗೆಗೆ ಅಗತ್ಯವಾದ ಪೋಷಕಾಂಶಗಳನ್ನು ಒದಗಿಸುವುದರ ಜೊತೆಗೆ ತಾಯಿ–ಮಗುವಿನ ಬಾಂಧವ್ಯವನ್ನು ಮತ್ತಷ್ಟು ಗಟ್ಟಿಗೊಳಿಸುತ್ತದೆ. ತಾಯಿ ಎದೆಹಾಲು ಪರಿಶುದ್ಧವಾಗಿದ್ದು, ಸುಲಭವಾಗಿ ಜೀರ್ಣವಾಗುವುದರಿಂದ ಅದನ್ನು ಅಮೃತಕ್ಕೆ ಸಮಾನವೆಂದು ಪರಿಗಣಿಸಲಾಗುತ್ತದೆ ಎಂದು ತಿಳಿಸಿದರು.

ಆರೋಗ್ಯ ಶಿಕ್ಷಣಾಧಿಕಾರಿ ಜಿ.ಬಿ. ಬಣಗಾರ ಮಾತನಾಡಿ, ಜನನದ ಮೊದಲ ಗಂಟೆಯಲ್ಲಿಯೇ ಎದೆಹಾಲುಣಿಸುವುದರಿಂದ ಮಗುವಿನ ರೋಗನಿರೋಧಕ ಶಕ್ತಿ ಹೆಚ್ಚುತ್ತದೆ. ತಾಯಿಯ ಮೊದಲ ಹಾಲು ಶಿಶುವಿನ ಆರೋಗ್ಯಕರ ಬದುಕಿಗೆ ಭದ್ರ ಬುನಾದಿಯಾಗಿದ್ದು, ಶಿಶು ಹಾಗೂ ತಾಯಿ ಮರಣ ಪ್ರಮಾಣ ತಗ್ಗಿಸಲು ಸಹಕಾರಿಯಾಗಿದೆ. ಆದ್ದರಿಂದ ಪ್ರತಿಯೊಬ್ಬ ತಾಯಿಯೂ ಮಗುವಿಗೆ ಕನಿಷ್ಠ ಆರು ತಿಂಗಳವರೆಗೆ ಕೇವಲ ತಾಯಿ ಎದೆಹಾಲನ್ನೇ ನೀಡಬೇಕು ಎಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ ಸುಧಾ ಪಪ್ತಿ, ಅಂಗನವಾಡಿ ಕಾರ್ಯಕರ್ತೆ ಸೌಮ್ಯಾ ಕಲ್ಯಾಣಮಠ, ಆಶಾ ಕಾರ್ಯಕರ್ತೆ ಶಶಿಕಲಾ ಚಿಂದಿ, ಆರೋಗ್ಯ ಸಿಬ್ಬಂದಿ, ಗರ್ಭಿಣಿಯರು ಹಾಗೂ ಬಾಣಂತಿಯರು ಉಪಸ್ಥಿತರಿದ್ದರು.

ದಂಡಿನ ದಂಪತಿಗಳ ಸೇವಾ ಬದುಕು ಸ್ಮರಿಸಿದ ಗಣ್ಯರು

0

ವಿಜಯಸಾಕ್ಷಿ ಸುದ್ದಿ, ಗದಗ: ಕಡುಬಡತನದಿಂದಲೇ ಶಿಕ್ಷಣ ಕ್ಷೇತ್ರದಲ್ಲಿ ಮಹೋನ್ನತ ಸಾಧನೆ ಮಾಡಿ ಸಾವಿರಾರು ವಿದ್ಯಾರ್ಥಿಗಳ ಬದುಕಿಗೆ ಬೆಳಕಾದ ಡಾ. ಬಿ.ಎಫ್. ದಂಡಿನ ಅವರ ಜೀವನ ಇಂದಿನ ಯುವಜನತೆಗೆ ಆದರ್ಶವಾಗಿದೆ ಎಂದು ಆರ್‌ಎಸ್‌ಎಸ್‌ನ ಅಖಿಲ ಭಾರತೀಯ ವ್ಯವಸ್ಥ ಪ್ರಮುಖ ಮಂಗೇಶ್ ಬೆಂಡೆಜಿ ಹೇಳಿದರು.

ನಗರದ ಗಾಣಿಗ ಭವನದಲ್ಲಿ ಕನಕದಾಸ ಶಿಕ್ಷಣ ಸಮಿತಿ ಹಾಗೂ ಡಾ. ಬಿ.ಎಫ್. ದಂಡಿನ ವಿದ್ಯಾರ್ಥಿ ಬಳಗದ ಆಶ್ರಯದಲ್ಲಿ ನಡೆದ ಡಾ. ಬಿ.ಎಫ್. ದಂಡಿನ ಹಾಗೂ ಶಕುಂತಲಾಬಾಯಿ ದಂಡಿನ ಅವರ ಸಾರ್ವಜನಿಕ ನುಡಿನಮನ ಸಭೆ ಮತ್ತು ಸ್ಮಾರಕ ಭೂಮಿಪೂಜೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕಾಗಿನೆಲೆ ಶ್ರೀ ರೇವಣಸಿದ್ದೇಶ್ವರ ಸಂಸ್ಥಾನ ಮಠದ ಶ್ರೀಗಳು ಮಾತನಾಡಿ, ದಂಡಿನ ಅವರು ಶಿಕ್ಷಣವನ್ನು ಸಾಮಾಜಿಕ ಚಳವಳಿಯನ್ನಾಗಿ ರೂಪಿಸಿದ ಅಪರೂಪದ ಮಹನೀಯರು ಎಂದು ಬಣ್ಣಿಸಿದರು. ನರಗುಂದ ಶಾಸಕ ಸಿ.ಸಿ. ಪಾಟೀಲ, ಮಾಜಿ ಶಾಸಕ ಡಿ.ಆರ್. ಪಾಟೀಲ, ಡಾ. ತೇಜಸ್ವಿ ಕಟ್ಟಿಮನಿ, ಮಲ್ಲಿಕಾರ್ಜುನ ಸಿದ್ದಣ್ಣನವರ, ದೊಡ್ಡನಗೌಡ ಪಾಟೀಲ ಸೇರಿದಂತೆ ಹಲವು ಗಣ್ಯರು ದಂಡಿನ ದಂಪತಿಗಳ ಶಿಕ್ಷಣ ಸೇವೆ ಮತ್ತು ಸಮಾಜಮುಖಿ ಕಾರ್ಯವನ್ನು ಸ್ಮರಿಸಿ ನಮನ ಸಲ್ಲಿಸಿದರು.

ಕಾರ್ಯಕ್ರಮದಲ್ಲಿ ವಿವಿಧ ಮಠಾಧೀಶರು, ಜನಪ್ರತಿನಿಧಿಗಳು, ಶಿಕ್ಷಣ ತಜ್ಞರು, ಕನಕದಾಸ ಶಿಕ್ಷಣ ಸಮಿತಿಯ ಪದಾಧಿಕಾರಿಗಳು, ನೂರಾರು ಹಳೆಯ ವಿದ್ಯಾರ್ಥಿಗಳು, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಪ್ರಜಾಪ್ರಭುತ್ವ ಸಂಭ್ರಮಕ್ಕೆ ಸಾಕ್ಷಿಯಾದ ವಿದ್ಯಾರ್ಥಿ ಸಂಘ ಚುನಾವಣೆ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಪಟ್ಟಣದ ಎಸ್.ಟಿ.ಪಿ.ಎಂ.ಬಿ. ಕಲಾ ಹಾಗೂ ವಾಣಿಜ್ಯ ಮಹಿಳಾ ಪದವಿ ಮಹಾವಿದ್ಯಾಲಯದಲ್ಲಿ ವಿದ್ಯಾರ್ಥಿ ಸಂಘದ ಚುನಾವಣೆ ಹಾಗೂ ನೂತನ ಪದಾಧಿಕಾರಿಗಳ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮ ಮಂಗಳವಾರ ಯಶಸ್ವಿಯಾಗಿ ನಡೆಯಿತು.

ವಿದ್ಯಾರ್ಥಿ ಸಂಘದ ಅಧ್ಯಕ್ಷೆ, ಉಪಾಧ್ಯಕ್ಷೆ, ಕಾರ್ಯದರ್ಶಿ, ಜಂಟಿ ಕಾರ್ಯದರ್ಶಿ ಸೇರಿದಂತೆ ವಿವಿಧ ಹುದ್ದೆಗಳಿಗೆ ವಿದ್ಯಾರ್ಥಿನಿಯರು ಉತ್ಸಾಹದಿಂದ ಸ್ಪರ್ಧಿಸಿದರು. ಮತದಾನದ ವೇಳೆ ವಿದ್ಯಾರ್ಥಿನಿಯರು ಶಿಸ್ತುಬದ್ಧವಾಗಿ ಸರದಿಯಲ್ಲಿ ನಿಂತು ಮತ ಚಲಾಯಿಸಿದ್ದು, ಕಾಲೇಜು ಆಡಳಿತ ಮಂಡಳಿ ಚುನಾವಣೆಯನ್ನು ಪಾರದರ್ಶಕವಾಗಿ ನಡೆಸಿತು.

ಮತ ಎಣಿಕೆ ಬಳಿಕ ವಿಜೇತ ಅಭ್ಯರ್ಥಿಗಳನ್ನು ಘೋಷಿಸಲಾಯಿತು. ಪ್ರಾಂಶುಪಾಲ ವಿಜಯಕುಮಾರ ಬಿಳೆಯಲಿ ಹಾಗೂ ಉಪನ್ಯಾಸಕರು ನೂತನ ಪದಾಧಿಕಾರಿಗಳಿಗೆ ಅಭಿನಂದನೆ ಸಲ್ಲಿಸಿ, ವಿದ್ಯಾರ್ಥಿಗಳ ಸಮಸ್ಯೆಗಳಿಗೆ ಸ್ಪಂದಿಸುವುದರ ಜೊತೆಗೆ ಕಾಲೇಜಿನ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುವಂತೆ ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ, ಸ್ನೇಹಾ ಮಾಲಿಗೌಡ್ರ, ಲಕ್ಷ್ಮಿ ಪಾಟೀಲ ಹಾಗೂ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.

ASDDO ಪಟ್ಟಿಗೆ 1.11 ಕೋಟಿ ಮತದಾರರು ಸೇರ್ಪಡೆ; ಹೆಸರು ಉಳಿಸಿಕೊಳ್ಳಲು ತಕ್ಷಣ ಫಾರ್ಮ್-6 ಸಲ್ಲಿಸುವಂತೆ ಚುನಾವಣಾ ಆಯೋಗ ಮನವಿ

ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (Special Intensive Revision – SIR) ಪ್ರಕ್ರಿಯೆ ಅಂತಿಮ ಹಂತ ತಲುಪಿದ್ದು, ಸುಮಾರು 1.11 ಕೋಟಿ ಮತದಾರರ ಹೆಸರು ಮತದಾರರ ಪಟ್ಟಿಯಿಂದ ಕೈಬಿಡುವ ಸಾಧ್ಯತೆ ಇದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಶೇ.80ರಷ್ಟು ಎನ್ಯುಮರೇಷನ್ ಫಾರ್ಮ್‌ಗಳ ಡಿಜಿಟಲೀಕರಣ ಪೂರ್ಣಗೊಂಡಿದೆ. ಒಟ್ಟು 1,11,04,705 ಮತದಾರರನ್ನು ASDDO (Absentee, Shifted, Dead, Duplicate and Others) ಪಟ್ಟಿಯಲ್ಲಿ ಗುರುತಿಸಲಾಗಿದೆ. ಈ ಪಟ್ಟಿಯಲ್ಲಿರುವವರು ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಮುಂದುವರಿಯಬೇಕಾದರೆ ಫಾರ್ಮ್-6 ಸಲ್ಲಿಸಬೇಕು ಎಂದು ಮನವಿ ಮಾಡಿದರು.

ರಾಜ್ಯದಲ್ಲಿ ಒಟ್ಟು 5.54 ಕೋಟಿ ಮತದಾರರು ಇದ್ದು, ಈ ಪೈಕಿ 4.43 ಕೋಟಿ ಮತದಾರರು ಗಣತಿ ನಮೂನೆಯನ್ನು ಭರ್ತಿ ಮಾಡಿದ್ದಾರೆ. ಬೆಂಗಳೂರು ನಗರ ವ್ಯಾಪ್ತಿಯಲ್ಲೇ ಅತಿ ಹೆಚ್ಚು ಮತದಾರರು ASDDO ಪಟ್ಟಿಗೆ ಸೇರ್ಪಡೆಯಾಗಿರುವುದು ಗಮನಾರ್ಹವಾಗಿದೆ ಎಂದು ಅವರು ಹೇಳಿದರು.

ಆಗಸ್ಟ್ 8ರಂದು ಎಸ್‌ಐಆರ್ ಪ್ರಕ್ರಿಯೆಯ ಮೊದಲ ಹಂತ ಪೂರ್ಣಗೊಳ್ಳಲಿದೆ. ಗಣತಿ ನಮೂನೆ ಸಿಗದವರು ಅಥವಾ ಸ್ಥಳಾಂತರಗೊಂಡಿರುವ ಸುಮಾರು 80 ಲಕ್ಷಕ್ಕೂ ಹೆಚ್ಚು ಮತದಾರರು ಆತಂಕಪಡುವ ಅಗತ್ಯವಿಲ್ಲ. ಕರ್ನಾಟಕದ ಯಾವುದೇ ಭಾಗದಲ್ಲಿದ್ದರೂ ಫಾರ್ಮ್-6 ಸಲ್ಲಿಸುವ ಮೂಲಕ ಹೊಸದಾಗಿ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಳ್ಳಬಹುದು ಎಂದು ಅವರು ಸ್ಪಷ್ಟಪಡಿಸಿದರು.

ಅನ್ಬುಕುಮಾರ್ ಅವರ ಪ್ರಕಾರ, ರಾಜ್ಯದ 57,787 ಮತಗಟ್ಟೆಗಳಲ್ಲಿ ಶೇ.100ರಷ್ಟು ಡಿಜಿಟಲೀಕರಣ ಕಾರ್ಯ ಪೂರ್ಣಗೊಂಡಿದೆ. 175 ವಿಧಾನಸಭಾ ಕ್ಷೇತ್ರಗಳಲ್ಲಿ ಸಂಪೂರ್ಣ ಕೆಲಸ ಮುಗಿದಿದ್ದು, 49 ಕ್ಷೇತ್ರಗಳಲ್ಲಿ ಶೇ.90ರಿಂದ 100ರಷ್ಟು ಪ್ರಗತಿ ಸಾಧಿಸಲಾಗಿದೆ. ಅಲ್ಲದೆ, 19 ಜಿಲ್ಲೆಗಳಲ್ಲಿ ಶೇ.100 ಹಾಗೂ 15 ಜಿಲ್ಲೆಗಳಲ್ಲಿ ಶೇ.90ಕ್ಕೂ ಹೆಚ್ಚು ಕಾರ್ಯ ಪೂರ್ಣಗೊಂಡಿದೆ.

ಎಸ್‌ಐಆರ್ ಪ್ರಕ್ರಿಯೆಯ ಪ್ರಮುಖ ಅಂಕಿ-ಅಂಶಗಳು

  • ಒಟ್ಟು ಗಣತಿ ನಮೂನೆಗಳ ಹಂಚಿಕೆ: 5,54,32,314
  • ಸ್ವೀಕೃತ ನಮೂನೆಗಳು: 4,43,04,632
  • ASDDO ಪಟ್ಟಿಯಲ್ಲಿರುವ ಮತದಾರರು: 1,11,04,705 (ಶೇ.20.03)

ASDDO ಪಟ್ಟಿಯಲ್ಲಿ ಯಾರು?

  • ಶಾಶ್ವತವಾಗಿ ಸ್ಥಳಾಂತರಗೊಂಡವರು: 66,64,943
  • ಪತ್ತೆಯಾಗದವರು: 16,30,012
  • ಮೃತಪಟ್ಟವರು: 16,30,872
  • ಎರಡು ಕಡೆ ಹೆಸರು ಹೊಂದಿರುವವರು: 6,89,904
  • ಮಾಹಿತಿ ನೀಡಲು ನಿರಾಕರಿಸಿದವರು: 4,88,974

ಬೆಂಗಳೂರಿನಲ್ಲಿ ASDDO ಪಟ್ಟಿಯಲ್ಲಿರುವ ಮತದಾರರು

  • ಬೆಂಗಳೂರು ದಕ್ಷಿಣ: 11,07,678 (ಒಟ್ಟು ಮತದಾರರು: 21,44,784)
  • ಬೆಂಗಳೂರು ಉತ್ತರ: 11,07,027 (ಒಟ್ಟು ಮತದಾರರು: 23,32,621)
  • ಬೆಂಗಳೂರು ಕೇಂದ್ರ: 9,15,035 (ಒಟ್ಟು ಮತದಾರರು: 18,89,919)

ರೈತರನ್ನು ಬೆದರಿಸಿ ಭೂಮಿ ಪಡೆಯಲು ಸಾಧ್ಯವಿಲ್ಲ: ಬಿಡದಿ ಟೌನ್ ಶಿಪ್ ವಿರೋಧಿಸಿ JDSನಿಂದ 3 ದಿನಗಳ ಪಾದಯಾತ್ರೆ – ನಿಖಿಲ್ ಕುಮಾರಸ್ವಾಮಿ

ಬೆಂಗಳೂರು: ಬಿಡದಿ ಟೌನ್‌ಶಿಪ್ ಯೋಜನೆಗೆ ವಿರೋಧ ವ್ಯಕ್ತಪಡಿಸಿರುವ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ರೈತರನ್ನು ಹೆದರಿಸಿ ಅಥವಾ ಬೆದರಿಸಿ ಒತ್ತಾಯಪೂರ್ವಕವಾಗಿ ಸಹಿ ಪಡೆಯಬಹುದು ಎಂದು ಸರ್ಕಾರ ಭಾವಿಸಿದ್ದರೆ ಅದು ಸಾಧ್ಯವಿಲ್ಲ ಎಂದು ತೀವ್ರ ವಾಗ್ದಾಳಿ ನಡೆಸಿದರು.

ಜೆ.ಪಿ. ಭವನದಲ್ಲಿ ನಡೆದ ಬಿಡದಿ ಪಾದಯಾತ್ರೆಯ ಪೂರ್ವಸಿದ್ಧತಾ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತರ ಹಕ್ಕುಗಳ ರಕ್ಷಣೆಗೆ ಜೆಡಿಎಸ್ ಹೋರಾಟ ರೂಪಿಸಿದ್ದು, ಯಾವುದೇ ಕಾರಣಕ್ಕೂ ರೈತರ ಹಿತಾಸಕ್ತಿಗೆ ಧಕ್ಕೆ ಬರುವುದನ್ನು ಸಹಿಸುವುದಿಲ್ಲ ಎಂದು ಹೇಳಿದರು.

ಬಿಡದಿ ಟೌನ್‌ಶಿಪ್ ಯೋಜನೆಗೆ ವಿರೋಧವಾಗಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಸತ್ಯಾಗ್ರಹ ಘೋಷಣೆ ಮಾಡಿದ ತಕ್ಷಣವೇ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಮಿತಿ ರಚಿಸುವುದಾಗಿ ಘೋಷಣೆ ಮಾಡಿದರು. ಅದೇ ದಿನ ನಾಲ್ಕು ಹಳ್ಳಿಗಳಿಗೆ ಅಧಿಸೂಚನೆ ಹೊರಡಿಸಿರುವುದು ಸರ್ಕಾರದ ದ್ವಂದ್ವ ನಿಲುವಿಗೆ ಸಾಕ್ಷಿಯಾಗಿದೆ ಎಂದು ನಿಖಿಲ್ ಕುಮಾರಸ್ವಾಮಿ ಆರೋಪಿಸಿದರು.

ಸಮಿತಿ ರಚಿಸುವುದಾಗಿ ಹೇಳಿದ ಸರ್ಕಾರ, ಅದರ ಉದ್ದೇಶವೇನು, ಸದಸ್ಯರು ಯಾರು ಎಂಬುದರ ಬಗ್ಗೆ ಯಾವುದೇ ಸ್ಪಷ್ಟತೆ ನೀಡಿಲ್ಲ. ಜಿಲ್ಲೆಯ ಜನರ ಭವಿಷ್ಯದ ಕುರಿತು ಅಧಿಕಾರಿಗಳಿಗೆ ಮರಣಶಾಸನ ಬರೆಯುವ ಅಧಿಕಾರವನ್ನು ಮುಖ್ಯಮಂತ್ರಿ ನೀಡಿದ್ದಾರೆಯೇ ಎಂದು ಅವರು ಪ್ರಶ್ನಿಸಿದರು.

ಇದೇ ವೇಳೆ, ಸ್ಥಳೀಯ ಶಾಸಕರಿಗೆ ಸಚಿವ ಸ್ಥಾನ ಸಿಕ್ಕಿರುವುದನ್ನು ಸ್ವಾಗತಿಸುವುದಾಗಿ ತಿಳಿಸಿದ ಅವರು, ಈಗಾಗಲೇ ಆಡಳಿತಾತ್ಮಕ ಪ್ರಕ್ರಿಯೆ ಆರಂಭಿಸಿ ಬಳಿಕ ಸಮಿತಿ ರಚಿಸುತ್ತೇವೆ ಎನ್ನುವುದು ಸರಿಯಾದ ಕ್ರಮವಲ್ಲ ಎಂದು ಟೀಕಿಸಿದರು.

ಬಿಡದಿ ಭಾಗದ ರೈತರ ಪರವಾಗಿ ಈ ಹಿಂದೆಯೂ ಜೆಡಿಎಸ್ 11 ಕಿಲೋಮೀಟರ್ ಪಾದಯಾತ್ರೆ ನಡೆಸಿತ್ತು. ಇದೀಗ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಸೂಚನೆಯಂತೆ ಆಗಸ್ಟ್‌ 9, 10 ಮತ್ತು 11ರಂದು ಮೂರು ದಿನಗಳ ಬೃಹತ್ ಪಾದಯಾತ್ರೆ ಆಯೋಜಿಸಲಾಗಿದೆ ಎಂದು ನಿಖಿಲ್ ಕುಮಾರಸ್ವಾಮಿ ತಿಳಿಸಿದರು.

ಸುಮಾರು ನಾಲ್ಕು ಸಾವಿರಕ್ಕೂ ಹೆಚ್ಚು ರೈತರು ತಮ್ಮ ಭೂಮಿಯನ್ನು ಉಳಿಸಿಕೊಳ್ಳುವ ಉದ್ದೇಶದಿಂದ ಈ ಪಾದಯಾತ್ರೆಯಲ್ಲಿ ಭಾಗವಹಿಸಲಿದ್ದು, ರೈತರ ಹಕ್ಕುಗಳಿಗಾಗಿ ಹೋರಾಟ ಮತ್ತಷ್ಟು ತೀವ್ರಗೊಳ್ಳಲಿದೆ ಎಂದು ಅವರು ಹೇಳಿದರು.