Home Blog

ಕೌಶಲ್ಯಾಭಿವೃದ್ಧಿ ಇಲಾಖೆಯ ವಿದೇಶ ಅಧ್ಯಯನ 2026ಕ್ಕೆ ಸಿಎಂ ಸಿಎಂ ಡಿ ಕೆ ಶಿವಕುಮಾರ್ ಚಾಲನೆ

0

ಬೆಂಗಳೂರು: “ನಮ್ಮಲ್ಲಿರುವ ಪ್ರತಿಭಾವಂತ ಮಾನವ ಸಂಪನ್ಮೂಲ, ದೇಶದ ಬೇರೆ ಯಾವುದೇ ರಾಜ್ಯಗಳಲ್ಲಿ ಇಲ್ಲ. ನಮ್ಮ ಮಕ್ಕಳು ಜಾಗತಿಕ ಮಟ್ಟದಲ್ಲಿ ಕಲಿಯಬೇಕು. ಅವರು ಕೇವಲ ಉದ್ಯೋಗಿಗಳಾಗುವುದಲ್ಲ, ಉದ್ಯೋಗದಾತರಾಗಬೇಕು ಎಂಬುದು ನಮ್ಮ ಬಯಕೆ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು.

ಕೌಶಲ್ಯಾಭಿವೃದ್ಧಿ ಇಲಾಖೆ ವತಿಯಿಂದ ಬೆಂಗಳೂರಿನ ಅರಮನೆ ಮೈದಾನದಲ್ಲಿ ಭಾನುವಾರ ನಡೆದ “ವಿದೇಶದಲ್ಲಿ ಅಧ್ಯಯನ 2026” ಕಾರ್ಯಕ್ರಮಕ್ಕೆ ಸಿಎಂ ಡಿ ಕೆ ಶಿವಕುಮಾರ್ ಅವರು ಚಾಲನೆ ನೀಡಿ ಮಾತನಾಡಿದರು.

“ದೇಶದ ಅಧ್ಯಯನಕ್ಕೆ ನಮ್ಮ ಸರ್ಕಾರ ಹೊಸ ಬಾಗಿಲು ತೆರೆದಿದೆ. ಶರಣ ಪ್ರಕಾಶ್ ಪಾಟೀಲ್ ಅವರ ನೇತೃತ್ವದಲ್ಲಿ ಸಾಗರತ್ತರ ಜ್ಞಾನ ಬೆಸೆಯುವಲ್ಲಿ ಅತ್ಯುತ್ತಮ ಕಾರ್ಯನಿರ್ವಹಿಸುತ್ತಿದ್ದಾರೆ. ಜ್ಞಾನದ ಮೇಲಿನ ಹೂಡಿಕೆ ಪ್ರತಿಯೊಬ್ಬರಿಗೂ ಅತ್ಯುತ್ತಮ ಆಸ್ತಿಯಾಗುತ್ತದೆ. ಮಾನವನಿಗೆ ಎಲ್ಲೆಗಳಿವೆ, ಆದರೆ ಜ್ಞಾನಕ್ಕೆ ಎಲ್ಲೆಗಲಿಲ್ಲ. ಜಾಗತಿಕ ಮಟ್ಟದ ಶಿಕ್ಷಣದ ಅವಕಾಶ ಪಡೆಯುವುದರಿಂದ ಮಾನಸಿಕವಾಗಿ ಬಲಿಷ್ಠರನ್ನಾಗಿಸುತ್ತದೆ” ಎಂದು ತಿಳಿಸಿದರು.

“ರುಪರಪ ಹರಿಸದ, ದಾಯಾದಿ ಧಕ್ಕಿಸದ, ಬೆಂಕಿಯಲ್ಲಿ ಸುಡದ, ನೀರಿನಲ್ಲಿ ನೆನೆಯದ, ಗುಪ್ತ ನಿಧಿ ವಿದ್ಯೆ ಎಂದು ನಮ್ಮ ಗುರುಗಳು ನಮಗೆ ಕಳಿಸಿದ್ದರು. ನಾವು ಕಲಿತ ವಿದ್ಯೆಯನ್ನು ಯಾರೂ ಕಸಿಯಲು ಸಾಧ್ಯವಿಲ್ಲ. ಸಚಿವರು ಹಾಗೂ ಸರ್ಕಾರ ನಿಮಗೆ ಜಾಗತಿಕ ಮಟ್ಟದಲ್ಲಿ ಅಧ್ಯಯನಕ್ಕೆ ಅವಕಾಶ ಕಲ್ಪಿಸಿ ನಿಮ್ಮ ಭವಿಷ್ಯವನ್ನು ಉಜ್ವಲಿಸುವಂತೆ ಮಾಡುತ್ತಿದೆ” ಎಂದರು.

“ಬೆಂಗಳೂರು ಜಾಗತಿಕ ನಗರ. ಇಲ್ಲಿ 2 ಲಕ್ಷ ವಿದೇಶಿ ಪಾಸ್ ಪೋರ್ಟ್ ದಾರರು ಕೆಲಸ ಮಾಡುತ್ತಿದ್ದು, ಸಿಲಿಕಾನ್ ವ್ಯಾಲಿ ಕ್ಯಾಲಿಫೋರ್ನಿಯದಲ್ಲಿ 16 ಲಕ್ಷ ಐಟಿ ವೃತ್ತಿಪರರು ಇದ್ದರೆ, ಬೆಂಗಳೂರಿನಲ್ಲಿ 26 ಲಕ್ಷ ಐಟಿ ವೃತ್ತಿಪರರು ಇದ್ದಾರೆ. ಪ್ರತಿ ವರ್ಷ 1 ಲಕ್ಷಕ್ಕೂ ಹೆಚ್ಚು ಇಂಜಿನಿಯರ್ ಗಳನ್ನು, 13,940 ವೈದ್ಯರನ್ನು ಉತ್ಪಾದನೆ ಮಾಡುತ್ತಿದ್ದು, ಇಷ್ಟು ದೊಡ್ಡ ಪ್ರಮಾಣದಲ್ಲಿ ಈ ಮಾನವ ಸಂಪನ್ಮೂಲವನ್ನು ಬೇರೆ ಎಲ್ಲೂ ತಯಾರಿಸುತ್ತಿಲ್ಲ” ಎಂದು ವಿವರಿಸಿದರು.

“ಮಹಾತ್ಮ ಗಾಂಧಿ, ಅಂಬೇಡ್ಕರ್, ರಾಜಾರಾಮ್ ಮೋಹನ್ ರಾಯ್ ರಂತಹ ನಾಯಕರು ವಿದೇಶದಲ್ಲಿ ಓದಿ, ನಮ್ಮ ದೇಶವನ್ನು ಮುನ್ನಡೆಸಿದ್ದಾರೆ. ವಿದೇಶದ ವಿವಿಗಳಲ್ಲಿ ನಮ್ಮ ಮಕ್ಕಳಿಗೆ ಅಧ್ಯಯನಕ್ಕೆ ಅವಕಾಶ ಕಲ್ಪಿಸಲು ಕರ್ನಾಟಕ ಸರ್ಕಾರ ಈ ಅವಕಾಶ ಕಲ್ಪಿಸಿದೆ. ಈ ಕಾರ್ಯಕ್ರಮದಲ್ಲಿ 80ಕ್ಕೂ ಹೆಚ್ಚು ವಿವಿಗಳು ಭಾಗವಹಿಸಿದ್ದು, 300ಕ್ಕೂ ಹೆಚ್ಚು ವಿಷಯಗಳಲ್ಲಿ ಅಧ್ಯಯನಕ್ಕೆ ಅವಕಾಶ ಕಲ್ಪಿಸಲಾಗಿದೆ. ಜೊತೆಗೆ ಸರ್ಕಾರದ ವಿವಿಧ ಇಲಾಖೆಗಳಿಂದ ವಿಶೇಷ ವಿದ್ಯಾರ್ಥಿ ವೇತನ ನೀಡಲಾಗುತ್ತಿದೆ. ವಿವಿಧ ಬ್ಯಾಂಕ್ ಗಳು ನೆರವು ನೀಡುತ್ತಿದ್ದು, 2 ಕೋಟಿ ರೂ. ವರೆಗೂ ಸಾಲ ಸೌಲಭ್ಯ ನೀಡುತ್ತಿವೆ. ರಾಜ್ಯದ ವಿದ್ಯಾರ್ಥಿಗಳು ಈ ಅವಕಾಶ ಸದುಪಯೋಗಪಡಿಸಿಕೊಂಡು ಬಲಿಷ್ಠವಾಗಬೇಕು. ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕು” ಎಂದು ಕಿವಿಮಾತು ಹೇಳಿದರು.

“ನಾವು ಕ್ವೀನ್ಸ್ ಲ್ಯಾಂಡ್ ವಿವಿ ಜೊತೆಗೆ ಒಡಂಬಡಿಕೆ ಮಾಡಿಕೊಂಡಿದ್ದು, ವಿದೇಶದ ವಿವಿಗಳಲ್ಲಿ ವ್ಯಾಸಂಗ ಮಾಡಲು 3,145 ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗಿದೆ. ನಮ್ಮ ಮಕ್ಕಳು ವಿದ್ಯಾಭ್ಯಾಸ ಮುಗಿಸಿದ್ದರೂ ಅವರು ಹೆಚ್ಚಿನ ಮಾಹಿತಿ ಪಡೆಯಲು ಇಲ್ಲಿಗೆ ಬನ್ನಿ ಎಂದು ಕರೆದಿರುವೆ” ಎಂದರು.

“ನಿಮ್ಮ ಭವಿಷ್ಯ ರಾಜ್ಯದ ಭವಿಷ್ಯ, ನಿಮ್ಮ ಶಕ್ತಿ ದೇಶದ ಶಕ್ತಿ. ವಿದ್ಯಾರ್ಥಿಗಳು ನಮ್ಮ ಆಸ್ತಿಗಳು. ಇಡೀ ವಿಶ್ವ ನಮ್ಮನ್ನು ಗಮನಿಸುತ್ತಿದೆ. ಭಾರತವನ್ನು ಬೆಂಗಳೂರು, ಕರ್ನಾಟಕದ ಮೂಲಕ ನೋಡಲಾಗುತ್ತಿದೆ. ನಮ್ಮ ವಿದ್ಯಾರ್ಥಿಗಳ ಚುರುಕುತನವನ್ನು ವಿಶ್ವದ ಉದ್ಯಮಗಳ ನಾಯಕರು ಗಮನಿಸುತ್ತಿದ್ದಾರೆ. ನಮ್ಮಲ್ಲಿನ ಸಂಸ್ಕೃತಿ, ಇತಿಹಾಸ, ಬಾಂಧವ್ಯದ ಮೂಲಕ ನಮ್ಮ ಮಕ್ಕಳು ಉತ್ತಮ ಪ್ರಜೆಗಳಾಗುತ್ತಿದ್ದಾರೆ. ನೀವು ನಿಮ್ಮ ಮೂಲ ಮರೆಯಬಾರದು, ಮರೆತರೆ ಯಶಸ್ಸು ಸಿಗುವುದಿಲ್ಲ. ಹೀಗಾಗಿ ನೀವು ನಿಮ್ಮ ಪೋಷಕರು, ಶಿಕ್ಷಕರನ್ನು ಮರೆಯಬಾರದು” ಎಂದು ಹೇಳಿದರು.

“ನಮ್ಮ ಸರ್ಕಾರ ಶಿಕ್ಷಕರಿಗೆ ಗೌರವ ನೀಡಲು Tr. (Teacher) ಎಂದು ತಮ್ಮ ಹೆಸರಿನ ಮುಂದೆ ಸೇರಿಸಲು ತೀರ್ಮಾನಿಸಿದ್ದೇವೆ. ನನಗೆ ನೂರಾರು ಕರೆ ಬಂದಿದ್ದು, ನಮ್ಮ ತೀರ್ಮಾನವನ್ನು ಸ್ವಾಗತಿಸಿದ್ದಾರೆ. ನಾವು ಗುರುಗಳನ್ನು ದೇವರಂತೆ ಕಾಣುತ್ತೇವೆ. ಶಿಕ್ಷಕರಿಗೆ ಗೌರವ ನೀಡಲು ಮುಂದಾಗಿದ್ದೇವೆ. ನಿಮ್ಮಲ್ಲಿ ಅವರ ಯಶಸ್ಸು ಕಾಣಲು ತಂದೆ ತಾಯಿ ಹಾಗೂ ಗುರುಗಳು ಬಯಸುತ್ತಾರೆ” ಎಂದರು.

“ಬೆಂಗಳೂರಿನಲ್ಲಿ 1.40 ಕೋಟಿ ಜನಸಂಖ್ಯೆ ಇದ್ದು, ಭಾರದಲ್ಲಿ 140 ಅಂತಾರಾಷ್ಟ್ರೀಯ ಶಾಲೆಗಳಿದ್ದು, ಬೆಂಗಳೂರಿನಲ್ಲಿ 38 ಅಂತಾರಾಷ್ಟ್ರೀಯ ಶಾಲೆಗಳಿವೆ. ಇದು ಕರ್ನಾಟಕದ ಶಕ್ತಿ. ಕರ್ನಾಟಕ ದೇಶದ ಜ್ಞಾನದ ಕೇಂದ್ರವಾಗಿದೆ. ನಿಮ್ಮೆಲ್ಲರಿಗೂ ಯಶಸ್ಸು ಸಿಗಲಿ” ಎಂದು ಶುಭ ಕೋರಿದರು.

ಕಳೆದ 3 ವರ್ಷಗಳಿಂದ ಜೆಡಿಎಸ್ʼನಲ್ಲಿ ನನಗೆ ಅವಮಾನವಾಗಿದೆ: ಮೈಸೂರಿನಲ್ಲಿ ಜಿ.ಟಿ. ದೇವೇಗೌಡ ಅಸಮಾಧಾನ ಸ್ಫೋಟ

0

ಮೈಸೂರು: ರಾಜ್ಯ ರಾಜಕಾರಣದ ಹೈವೋಲ್ಟೇಜ್ ಕ್ಷೇತ್ರಗಳಲ್ಲೊಂದಾದ ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜೆಡಿಎಸ್ ಜಂಟಿ ಆಂತರಿಕ ಅಸಮಾಧಾನ ಸ್ಫೋಟಗೊಂಡಿದೆ. “ಕಳೆದ ಮೂರು ವರ್ಷಗಳಿಂದ ಜನತಾದಳ (ಜೆಡಿಎಸ್) ಪಕ್ಷದಲ್ಲಿ ನನಗೆ ತೀವ್ರ ಅವಮಾನವಾಗಿದೆ” ಎಂದು ಹಿರಿಯ ಶಾಸಕ ಜಿ.ಟಿ. ದೇವೇಗೌಡ (GTD) ಬಹಿರಂಗವಾಗಿ ತಮ್ಮ ಬೇಸರ ಹಾಗೂ ಆಕ್ರೋಶವನ್ನು ಹೊರಹಾಕಿದ್ದಾರೆ.

ಅವಮಾನಕ್ಕೆ ಉತ್ತರ ನೀಡಲು ಮೆರವಣಿಗೆ: ಚಾಮುಂಡೇಶ್ವರಿ ಕ್ಷೇತ್ರದ ಸಾರ್ವಜನಿಕರು ಹಮ್ಮಿಕೊಂಡಿದ್ದ ರಾಜಕೀಯ ಮೆರವಣಿಗೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಪಕ್ಷದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. “ನಾನು ಜೆಡಿಎಸ್ ಶಾಸಕನಾಗಿದ್ದರೂ ಪಕ್ಷದ ಯಾವುದೇ ಕಾರ್ಯಕ್ರಮ ಅಥವಾ ಪ್ರಮುಖ ಸಮಾವೇಶಗಳಿಗೆ ನನ್ನನ್ನು ಕರೆಯದೆ ಅವಮಾನ ಮಾಡಲಾಯಿತು. ಈ ಅವಮಾನಕ್ಕೆ ಸೂಕ್ತ ಉತ್ತರ ನೀಡಲೆಂದೇ ನಮ್ಮ ಕ್ಷೇತ್ರದ ಜನರು ಇಂದು ಬೃಹತ್ ಮೆರವಣಿಗೆಯನ್ನು ನಡೆಸುತ್ತಿದ್ದಾರೆ. ಇದು ನನ್ನ ವೈಯಕ್ತಿಕ ಶಕ್ತಿ ಪ್ರದರ್ಶನವಲ್ಲ, ಬದಲಿಗೆ ಚಾಮುಂಡೇಶ್ವರಿ ಕ್ಷೇತ್ರದ ಜನತೆ ನನ್ನ ಮೇಲಿಟ್ಟಿರುವ ಪ್ರೀತಿಯ ಸಂಕೇತ” ಎಂದು ಅವರು ಭಾವನಾತ್ಮಕವಾಗಿ ಬಣ್ಣಿಸಿದರು.

ಪಕ್ಷ ಮುಖ್ಯವಲ್ಲ, ಜಿ.ಟಿ. ದೇವೇಗೌಡ ಮುಖ್ಯ: ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಪಕ್ಷಕ್ಕಿಂತ ವ್ಯಕ್ತಿಯೇ ಪ್ರಮುಖ ಎಂಬುದನ್ನು ಒತ್ತಿಹೇಳಿದ ಜಿಟಿಡಿ, “ನಮ್ಮ ಕ್ಷೇತ್ರದಲ್ಲಿ ಪಕ್ಷ ಯಾವುದೇ ಇರಲಿ, ಜನರಿಗೆ ಜಿ.ಟಿ. ದೇವೇಗೌಡ ಮಾತ್ರ ಮುಖ್ಯ. ನನ್ನನ್ನು ಏಕಾಂಗಿಯಾಗಿಸಲು ಕ್ಷೇತ್ರದ ಜನತೆ ಎಂದಿಗೂ ಬಿಡುವುದಿಲ್ಲ. ನನ್ನ ಕೊನೆಯುಸಿರು ಇರುವ ತನಕ ನಾನು ಏಕಾಂಗಿಯಾಗಿಯೇ ಈ ಜನರ ಸೇವೆ ಮಾಡುತ್ತೇನೆ. ಹಿಂದೆ ನಾನು ಬಿಜೆಪಿಗೆ ಹೋದಾಗ ಚಾಮುಂಡೇಶ್ವರಿಯಲ್ಲಿ ಬಿಜೆಪಿ-ಜೆಡಿಎಸ್ ಜಂಟಿಯಾಗಿ ಮೂರನೇ ಸ್ಥಾನಕ್ಕೆ ತಳ್ಳಲ್ಪಟ್ಟಿದ್ದವು. ನನ್ನ ವಿರುದ್ಧ ಎಂತಹ ದೊಡ್ಡ ನಾಯಕರು ಸ್ಪರ್ಧಿಸಿದರೂ ಕ್ಷೇತ್ರದ ಜನರು ಎಂದೂ ನನ್ನ ಕೈಬಿಟ್ಟಿಲ್ಲ” ಎಂದು ಹಳೆಯ ದಿನಗಳನ್ನು ನೆನಪಿಸಿಕೊಂಡರು.

ಎಚ್.ಡಿ. ಕುಮಾರಸ್ವಾಮಿಗೆ ನೇರ ಕೌಂಟರ್: ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರ ಹೇಳಿಕೆಯೊಂದಕ್ಕೆ ನೇರ ಕೌಂಟರ್ ನೀಡಿದ ಜಿ.ಟಿ. ದೇವೇಗೌಡ ಅವರು, “ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜನರು ಅಭ್ಯರ್ಥಿ ಯಾರು ಎಂದು ನೋಡುವುದಿಲ್ಲ. ಅವರು ಕೇವಲ ನನ್ನ ಮುಖವನ್ನು ನೋಡಿ ಮತ ಹಾಕುತ್ತಾರೆ” ಎಂದು ಸ್ಪಷ್ಟಪಡಿಸಿದರು. ಇದರೊಂದಿಗೆ, ಮುಂಬರುವ ಮುಂದಿನ ಚುನಾವಣೆಯ ದಾರಿಯ ಕುರಿತು ಕ್ಷೇತ್ರದ ಜನರನ್ನು ಕರೆದು, ಅವರು ನೀಡುವ ಸಲಹೆಯಂತೆಯೇ ತಮ್ಮ ಮುಂದಿನ ನಿರ್ಧಾರವನ್ನು ತೆಗೆದುಕೊಳ್ಳುವುದಾಗಿ ಘೋಷಿಸಿದರು.

RCB ಅಭಿಮಾನಿಗಳಿಗೆ ಭರ್ಜರಿ ಗುಡ್ ನ್ಯೂಸ್! ಆರ್ಯಮನ್ ಬಿರ್ಲಾ ನೀಡಿದ ಸಿಹಿಸುದ್ದಿ ಏನು ಗೊತ್ತಾ?

0

ಬೆಂಗಳೂರು: ಐಪಿಎಲ್‌ನ ಅತ್ಯಂತ ಜನಪ್ರಿಯ ಫ್ರಾಂಚೈಸಿಗಳಲ್ಲಿ ಒಂದಾಗಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ಹೆಸರು ಬದಲಾಗಲಿದೆ ಎಂಬ ಸಾಮಾಜಿಕ ಜಾಲತಾಣಗಳ ವದಂತಿಗಳಿಗೆ ಇದೀಗ ತೆರೆ ಬಿದ್ದಿದೆ. ತಂಡದ ನೂತನ ಚೇರ್ಮನ್ ಆರ್ಯಮನ್ ಬಿರ್ಲಾ ಅವರು ಆರ್‌ಸಿಬಿ ತಂಡದ ಹೆಸರು ಬದಲಿಸುವ ಯಾವುದೇ ಉದ್ದೇಶವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಇತ್ತೀಚೆಗೆ ನಡೆದ ಮಾಧ್ಯಮ ಸಂವಾದದಲ್ಲಿ ಮಾತನಾಡಿದ ಆರ್ಯಮನ್ ಬಿರ್ಲಾ, ‘ರಾಯಲ್ ಚಾಲೆಂಜರ್ಸ್ ಬೆಂಗಳೂರು’ ಎಂಬ ಹೆಸರನ್ನು ಬದಲಿಸುವ ಯಾವುದೇ ಆಲೋಚನೆ ನಮ್ಮ ಮುಂದಿಲ್ಲ. ನಮಗೆ ಈ ಹೆಸರು ತುಂಬಾ ಇಷ್ಟ. ಇದೇ ಹೆಸರನ್ನು ಮುಂದುವರಿಸಲಿದ್ದೇವೆ’ ಎಂದು ಸ್ಪಷ್ಟಪಡಿಸಿದ್ದಾರೆ.

ಆರ್‌ಸಿಬಿ ಕೇವಲ ತಂಡವಲ್ಲ, ಒಂದು ಬ್ರ್ಯಾಂಡ್:

ಆರ್‌ಸಿಬಿ ಕೇವಲ ಕ್ರಿಕೆಟ್ ತಂಡವಲ್ಲ. ಕೋಟ್ಯಂತರ ಅಭಿಮಾನಿಗಳ ಭಾವನೆ ಮತ್ತು ಬಲವಾದ ಕ್ರಿಕೆಟ್ ಬ್ರ್ಯಾಂಡ್ ಆಗಿದೆ. ವರ್ಷಗಳಿಂದ ತಂಡದೊಂದಿಗೆ ಬೆಸೆದುಕೊಂಡಿರುವ ಅಭಿಮಾನಿಗಳ ಪ್ರೀತಿ ಹಾಗೂ ಸಮುದಾಯದ ಬಾಂಧವ್ಯವನ್ನು ಹೊಸ ಆಡಳಿತ ಗೌರವಿಸುತ್ತದೆ ಎಂದು ಆರ್ಯಮನ್ ಬಿರ್ಲಾ ಹೇಳಿದ್ದಾರೆ.

ಹೀಗಾಗಿ ತಂಡದ ಹೆಸರು ಬದಲಾವಣೆಯ ಕುರಿತು ಹರಿದಾಡುತ್ತಿದ್ದ ಎಲ್ಲ ವದಂತಿಗಳಿಗೆ ಹೊಸ ಚೇರ್ಮನ್ ಅವರ ಹೇಳಿಕೆ ಸ್ಪಷ್ಟ ಉತ್ತರ ನೀಡಿದೆ. ಮುಂದಿನ ದಿನಗಳಲ್ಲೂ ಆರ್‌ಸಿಬಿ, ರಾಯಲ್ ಚಾಲೆಂಜರ್ಸ್ ಬೆಂಗಳೂರು ಎಂಬ ಹೆಸರಿನಲ್ಲೇ ಐಪಿಎಲ್‌ನಲ್ಲಿ ಕಣಕ್ಕಿಳಿಯಲಿದೆ.

ವದಂತಿಗಳಿಗೆ ಕಾರಣವೇನು?

ಯುನೈಟೆಡ್ ಸ್ಪಿರಿಟ್ಸ್ ಲಿಮಿಟೆಡ್ (USL) ಸಂಸ್ಥೆಯಿಂದ ಆರ್‌ಸಿಬಿ ಫ್ರಾಂಚೈಸಿಯನ್ನು ಆದಿತ್ಯ ಬಿರ್ಲಾ ಗ್ರೂಪ್ ನೇತೃತ್ವದ ಒಕ್ಕೂಟವು ಖರೀದಿಸಿದ ಬಳಿಕ ತಂಡದ ಹೆಸರಿನ ಕುರಿತು ವದಂತಿಗಳು ಹರಡಿದ್ದವು. ಬೋಲ್ಟ್ ವೆಂಚರ್ಸ್, ಬ್ಲ್ಯಾಕ್‌ಸ್ಟೋನ್ ಮತ್ತು ಟೈಮ್ಸ್ ಆಫ್ ಇಂಡಿಯಾ ಗ್ರೂಪ್ ಒಳಗೊಂಡ ಒಕ್ಕೂಟವು ಬರೋಬ್ಬರಿ 1.78 ಬಿಲಿಯನ್ ಡಾಲರ್ (ಸುಮಾರು ₹16,706 ಕೋಟಿ) ಮೊತ್ತಕ್ಕೆ ಫ್ರಾಂಚೈಸಿಯನ್ನು ಸ್ವಾಧೀನಪಡಿಸಿಕೊಂಡಿದೆ ಎಂದು ವರದಿಯಾಗಿತ್ತು.

ಮಾಲೀಕತ್ವ ಬದಲಾವಣೆಯ ಬೆನ್ನಲ್ಲೇ ಹೊಸ ಆಡಳಿತ ತಂಡದ ಹೆಸರು ಅಥವಾ ಬ್ರ್ಯಾಂಡ್ ಬದಲಾಯಿಸಬಹುದು ಎಂಬ ಚರ್ಚೆಗಳು ಸಾಮಾಜಿಕ ಜಾಲತಾಣಗಳಲ್ಲಿ ಆರಂಭವಾಗಿದ್ದವು. ಆದರೆ ಇದೀಗ ಆರ್ಯಮನ್ ಬಿರ್ಲಾ ಅವರ ಸ್ಪಷ್ಟ ಹೇಳಿಕೆಯೊಂದಿಗೆ ಈ ಎಲ್ಲಾ ಊಹಾಪೋಹಗಳಿಗೆ ತೆರೆ ಬಿದ್ದಿದೆ.

ಆರ್‌ಸಿಬಿ ತಂಡ:

ರಜತ್ ಪಾಟಿದಾರ್ (ನಾಯಕ), ವಿರಾಟ್ ಕೊಹ್ಲಿ, ದೇವದತ್ ಪಡಿಕ್ಕಲ್, ಫಿಲ್ ಸಾಲ್ಟ್, ಜಿತೇಶ್ ಶರ್ಮಾ, ಕೃನಾಲ್ ಪಾಂಡ್ಯ, ಸ್ವಪ್ನಿಲ್ ಸಿಂಗ್, ಟಿಮ್ ಡೇವಿಡ್, ರೊಮಾರಿಯೊ ಶೆಫರ್ಡ್, ಜೇಕಬ್ ಬೆಥೆಲ್, ಜೋಶ್ ಹೇಝಲ್‌ವುಡ್, ಯಶ್ ದಯಾಲ್, ಭುವನೇಶ್ವರ್ ಕುಮಾರ್, ನುವಾನ್ ತುಷಾರ, ರಾಸಿಖ್ ಸಲಾಂ, ವೆಂಕಟೇಶ್ ಅಯ್ಯರ್, ಅಭಿನಂದನ್ ಸಿಂಗ್, ಸುಯಶ್ ಶರ್ಮಾ, ಜೇಕಬ್ ಡಫಿ, ಸಾತ್ವಿಕ್ ದೇಸ್ವಾಲ್, ಮಂಗೇಶ್ ಯಾದವ್, ಜೋರ್ಡನ್ ಕಾಕ್ಸ್, ವಿಕಿ ಓಸ್ತ್ವಾಲ್, ವಿಹಾನ್ ಮಲ್ಹೋತ್ರಾ, ಕಾನಿಷ್ಕ್ ಚೌಹಾನ್, ರಿಚರ್ಡ್ ಗ್ಲೀಸನ್.

ಹೀಗಾಗಿ ಮಾಲೀಕತ್ವ ಬದಲಾದರೂ ಆರ್‌ಸಿಬಿಯ ಹೆಸರು, ಗುರುತು ಮತ್ತು ಅಭಿಮಾನಿಗಳೊಂದಿಗೆ ತಂಡ ಹೊಂದಿರುವ ಭಾವನಾತ್ಮಕ ಸಂಪರ್ಕವನ್ನು ಮುಂದುವರಿಸುವುದಾಗಿ ಹೊಸ ಆಡಳಿತ ಸ್ಪಷ್ಟಪಡಿಸಿದೆ.

KPSC ಅಕ್ರಮದ ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ! ರಾಜ್ಯದಲ್ಲಿ ಜೆನ್‌-ಝೀ ಮಾದರಿ ಹೋರಾಟಕ್ಕೆ ಭರ್ಜರಿ ಪ್ಲ್ಯಾನ್‌

0

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ (KPSC) ನೇಮಕಾತಿ ಹಗರಣದ ವಿರುದ್ಧ ಇದೀಗ ವಿದ್ಯಾರ್ಥಿಗಳೇ ಅಖಾಡಕ್ಕೆ ಇಳಿಯಲು ಸಜ್ಜಾಗಿದ್ದಾರೆ. ರಾಜ್ಯದಲ್ಲಿ ಜೆನ್‌-ಝೀ ಮಾದರಿಯ ಹೋರಾಟಕ್ಕೆ ಯುವಕರು ಮುಂದಾಗಿದ್ದು, ಕೆಪಿಎಸ್‌ಸಿ ಅಕ್ರಮದ ವಿರುದ್ಧ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಲು ಸಿದ್ಧತೆ ನಡೆಸಿದ್ದಾರೆ.

ಕೆಪಿಎಸ್‌ಸಿ ನೇಮಕಾತಿ ಅಕ್ರಮದ ಕುರಿತು ಅಪರಾಧ ತನಿಖಾ ಇಲಾಖೆ (CID) ತನಿಖೆ ನಡೆಸುತ್ತಿರುವ ನಡುವೆಯೇ ವಿದ್ಯಾರ್ಥಿಗಳು ಸ್ವತಃ ಪ್ರತಿಭಟನೆಗೆ ಮುಂದಾಗಿರುವುದು ಗಮನ ಸೆಳೆದಿದೆ. ದೆಹಲಿಯಲ್ಲಿ ನೀಟ್‌ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಯ ಮಾದರಿಯಲ್ಲಿ ಈ ಹೋರಾಟ ನಡೆಸಲು ವಿದ್ಯಾರ್ಥಿ ಸಂಘಟನೆಗಳು ಸಿದ್ಧತೆ ನಡೆಸಿವೆ ಎನ್ನಲಾಗಿದೆ.

ಬೆಂಗಳೂರಿನಲ್ಲಿ ಇದೇ ತಿಂಗಳ ಎರಡನೇ ವಾರದಿಂದ ಪ್ರತಿಭಟನೆ ಆರಂಭವಾಗುವ ಸಾಧ್ಯತೆ ಇದ್ದು, ವಿವಿಧ ವಿದ್ಯಾರ್ಥಿ ಸಂಘಟನೆಗಳು ಹೋರಾಟಕ್ಕೆ ಸಜ್ಜಾಗಿವೆ. ಪ್ರಮುಖವಾಗಿ ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾಗುತ್ತಿರುವ ಅಕ್ರಮದ ಕುರಿತು ಸಮಗ್ರ ತನಿಖೆಗೆ ಆಗ್ರಹಿಸುವುದರ ಜೊತೆಗೆ, ಪರೀಕ್ಷೆಯನ್ನು ಮರು ನಡೆಸಬೇಕು ಎಂಬ ಬೇಡಿಕೆಯನ್ನು ವಿದ್ಯಾರ್ಥಿಗಳು ಮುಂದಿಡಲಿದ್ದಾರೆ.

ಪಶುವೈದ್ಯಾಧಿಕಾರಿಗಳ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿಬಂದಿದ್ದು, ಕೆಪಿಎಸ್‌ಸಿಯ ಪರೀಕ್ಷಾ ಪ್ರಕ್ರಿಯೆಯಲ್ಲೇ ಅಕ್ರಮ ನಡೆದಿದೆ ಎನ್ನಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಅಕ್ರಮದ ವಿರುದ್ಧ ಧ್ವನಿ ಎತ್ತಲು ವಿದ್ಯಾರ್ಥಿಗಳು ಹಾಗೂ ಪರೀಕ್ಷಾರ್ಥಿಗಳು ಬೀದಿಗಿಳಿಯಲು ನಿರ್ಧರಿಸಿದ್ದಾರೆ.

ಪರೀಕ್ಷಾರ್ಥಿಗಳು ಈಗಾಗಲೇ ಮರುಪರೀಕ್ಷೆ ನಡೆಸುವಂತೆ ಒತ್ತಾಯಿಸಿ ಮುಖ್ಯಮಂತ್ರಿ ಹಾಗೂ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ. ಇದೀಗ ಸರ್ಕಾರದ ಮೇಲೆ ಮತ್ತಷ್ಟು ಒತ್ತಡ ಹೇರಲು ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ಮರುಪರೀಕ್ಷೆ ನಡೆಸಿ ಅರ್ಹ ಅಭ್ಯರ್ಥಿಗಳಿಗೆ ನ್ಯಾಯ ಒದಗಿಸಬೇಕು ಎಂಬುದು ವಿದ್ಯಾರ್ಥಿಗಳ ಪ್ರಮುಖ ಬೇಡಿಕೆಯಾಗಿದೆ.

ಈ ನಡುವೆ ಕೆಪಿಎಸ್‌ಸಿ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಸಿಐಡಿ ತನಿಖೆ ಮುಂದುವರಿಸಿದ್ದು, ಅಕ್ರಮದ ಹಿಂದೆ ಯಾರು ಭಾಗಿಯಾಗಿದ್ದಾರೆ ಎಂಬುದನ್ನು ಪತ್ತೆಹಚ್ಚುವ ಕಾರ್ಯ ನಡೆಯುತ್ತಿದೆ.

‘ಭಕ್ತರ ಹಣ ದುರುಪಯೋಗ ದೇವರಿಗೆ ಎಸಗುವ ವಂಚನೆ’; ದೇವಾಲಯ ಸಿಬ್ಬಂದಿ ವಜಾ ಕ್ರಮ ಎತ್ತಿಹಿಡಿದ ಹೈಕೋರ್ಟ್

0

ಬೆಂಗಳೂರು: ದೇವಾಲಯಕ್ಕೆ ಬರುವ ಭಕ್ತರ ಹಣವನ್ನು ದುರುಪಯೋಗಪಡಿಸಿಕೊಳ್ಳುವುದು ದೇವರಿಗೆ ಎಸಗುವ ವಂಚನೆ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಪ್ರಸಿದ್ಧ ದುರ್ಗಾಪರಮೇಶ್ವರಿ ದೇವಾಲಯದಲ್ಲಿ ನಕಲಿ ರಸೀದಿಗಳನ್ನು ನೀಡಿ ವಂಚನೆ ಎಸಗಿದ ಆರೋಪ ಎದುರಿಸುತ್ತಿದ್ದ ದ್ವಿತೀಯ ದರ್ಜೆ ಸಹಾಯಕ ರಾಜೇಶ್ ನಾಯಕ್ ಅವರನ್ನು ಸೇವೆಯಿಂದ ವಜಾಗೊಳಿಸಿರುವ ಧಾರ್ಮಿಕ ದತ್ತಿ ಇಲಾಖೆಯ ಕ್ರಮವನ್ನು ಹೈಕೋರ್ಟ್ ಎತ್ತಿಹಿಡಿದಿದೆ.

ತಮ್ಮನ್ನು ಸೇವೆಯಿಂದ ವಜಾಗೊಳಿಸಿರುವ ಕ್ರಮವನ್ನು ಪ್ರಶ್ನಿಸಿ ರಾಜೇಶ್ ನಾಯಕ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರ ಏಕಸದಸ್ಯ ನ್ಯಾಯಪೀಠ, ಲಭ್ಯವಿದ್ದ ಸಾಕ್ಷ್ಯಾಧಾರಗಳನ್ನು ಪರಿಶೀಲಿಸಿದ ಬಳಿಕ ಅರ್ಜಿಯನ್ನು ವಜಾಗೊಳಿಸಿದೆ.

ವಿಚಾರಣೆ ವೇಳೆ, ದೇವಾಲಯಕ್ಕೆ ಬರುವ ಭಕ್ತರ ಹಣವನ್ನು ದುರುಪಯೋಗಪಡಿಸಿಕೊಳ್ಳುವುದು ದೇವರಿಗೇ ಎಸಗುವ ವಂಚನೆಯಾಗಿದೆ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ. ನಂಬಿಕೆಯ ಹುದ್ದೆಯಲ್ಲಿದ್ದುಕೊಂಡು ಭ್ರಷ್ಟಾಚಾರ ಎಸಗಿದ ಸಂದರ್ಭದಲ್ಲಿ ಸೇವೆಯಿಂದ ವಜಾಗೊಳಿಸುವ ಶಿಕ್ಷೆ ಸೂಕ್ತವಾಗಿದೆ ಎಂದು ಹೈಕೋರ್ಟ್ ಹೇಳಿದೆ.

ಇದೇ ವೇಳೆ, ರಾಜ್ಯದ ಮುಜರಾಯಿ ದೇವಾಲಯಗಳ ಆದಾಯ ಸೋರಿಕೆಯನ್ನು ತಡೆಯಲು ಹಾಗೂ ಆಡಳಿತದಲ್ಲಿ ಹೆಚ್ಚಿನ ಪಾರದರ್ಶಕತೆ ತರಲು ಡಿಜಿಟಲ್ ಲೆಕ್ಕಪತ್ರ ವ್ಯವಸ್ಥೆಯನ್ನು ಜಾರಿಗೆ ತರಬೇಕು ಎಂದು ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ. ದೇವಾಲಯಗಳ ಹಣಕಾಸು ವ್ಯವಹಾರಗಳಲ್ಲಿ ಪಾರದರ್ಶಕತೆ ಹಾಗೂ ಕಟ್ಟುನಿಟ್ಟಿನ ಮೇಲ್ವಿಚಾರಣೆ ಇರಲು ಅಗತ್ಯ ಆಡಳಿತಾತ್ಮಕ ಮಾರ್ಗಸೂಚಿಗಳನ್ನು ರೂಪಿಸುವಂತೆಯೂ ಸೂಚಿಸಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಮುಜರಾಯಿ ಇಲಾಖೆಯ ಪರವಾಗಿ ವಕೀಲ ಹರೀಶ್ಚಂದ್ರ ಮೋವ್ವಾರ್ ವಾದ ಮಂಡಿಸಿದ್ದರು. ಸಾಕ್ಷ್ಯಾಧಾರಗಳನ್ನು ಪರಿಗಣಿಸಿದ ನ್ಯಾಯಪೀಠ, ಇಲಾಖೆಯು ಕೈಗೊಂಡ ವಜಾ ಕ್ರಮದಲ್ಲಿ ಹಸ್ತಕ್ಷೇಪದ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿ ಅರ್ಜಿಯನ್ನು ತಿರಸ್ಕರಿಸಿದೆ.

ಬೆಂಗಳೂರಿನಲ್ಲಿ ಗಣೇಶ ಹಬ್ಬಕ್ಕೆ ಟಫ್‌ ರೂಲ್ಸ್‌! ನಿಯಮ ಉಲ್ಲಂಘಿಸಿದ್ರೆ ಕ್ರಮ ಫಿಕ್ಸ್‌ ಎಂದ ನಗರ ಪೊಲೀಸ್‌ ಆಯುಕ್ತ

0

ಬೆಂಗಳೂರು: ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಪೊಲೀಸರು ಕಠಿಣ ನಿಯಮಗಳನ್ನು ಜಾರಿಗೆ ತಂದಿದ್ದು, ಈ ಕುರಿತು ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಮಹತ್ವದ ಮಾಹಿತಿ ನೀಡಿದ್ದಾರೆ. ಗಣೇಶೋತ್ಸವದ ಸಂಪೂರ್ಣ ಜವಾಬ್ದಾರಿ ಆಯೋಜಕರದ್ದಾಗಿದ್ದು, ಪೊಲೀಸ್ ಇಲಾಖೆ ಹಾಗೂ ಜಿಬಿಎ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚಿಸಲಾಗಿದೆ.

ಗಣೇಶೋತ್ಸವ ಆಚರಣೆಗೆ ಸಂಬಂಧಿಸಿದಂತೆ ಅಗತ್ಯವಿರುವ ವಿವಿಧ ಇಲಾಖೆಗಳ ಅನುಮತಿ ಪಡೆಯುವುದು ಕಡ್ಡಾಯವಾಗಿದೆ. ಅನುಮತಿ ಪಡೆದ ಬಳಿಕವಷ್ಟೇ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಲು ಅವಕಾಶ ನೀಡಲಾಗುತ್ತದೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

ಇದರ ಜೊತೆಗೆ ಗಣೇಶೋತ್ಸವ ಹಾಗೂ ಮೆರವಣಿಗೆ ವೇಳೆ ಸುಪ್ರೀಂ ಕೋರ್ಟ್‌ ನೀಡಿರುವ ಆದೇಶಗಳು ಮತ್ತು ಮಾರ್ಗಸೂಚಿಗಳನ್ನು ಯಾವುದೇ ಕಾರಣಕ್ಕೂ ಉಲ್ಲಂಘಿಸುವಂತಿಲ್ಲ. ನಿಗದಿಪಡಿಸಿರುವ ಸಮಯದೊಳಗೆ ಹಾಗೂ ಪೊಲೀಸರು ಅನುಮತಿ ನೀಡಿರುವ ನಿರ್ದಿಷ್ಟ ಮಾರ್ಗದಲ್ಲೇ ಗಣೇಶೋತ್ಸವದ ಮೆರವಣಿಗೆ ನಡೆಸಬೇಕು ಎಂದು ಸೂಚಿಸಲಾಗಿದೆ.

ಮೆರವಣಿಗೆ ಸಂದರ್ಭದಲ್ಲಿ ಕಾರ್ಯನಿರ್ವಹಿಸುವ ಸ್ವಯಂಸೇವಕರ ಪಟ್ಟಿಯನ್ನು ಮುಂಚಿತವಾಗಿ ಪೊಲೀಸರಿಗೆ ನೀಡುವುದು ಕಡ್ಡಾಯವಾಗಿರಲಿದೆ. ಮೆರವಣಿಗೆ ಸಾಗುವ ಮಾರ್ಗ ಹಾಗೂ ಗಣೇಶ ವಿಸರ್ಜನೆ ನಡೆಯುವ ಸ್ಥಳಗಳಲ್ಲಿ ಜಿಬಿಎ ಅಧಿಕಾರಿಗಳು ಮತ್ತು ಸಂಬಂಧಪಟ್ಟ ಡಿಸಿಪಿಗಳ ನೇತೃತ್ವದಲ್ಲಿ ಪರಿಶೀಲನೆ ನಡೆಯಲಿದೆ.

ಗಣೇಶೋತ್ಸವದ ಸಂದರ್ಭದಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ಹಾಗೂ ಕಾನೂನು ಮತ್ತು ಸುವ್ಯವಸ್ಥೆಗೆ ಯಾವುದೇ ಧಕ್ಕೆಯಾಗದಂತೆ ಆಯೋಜಕರು ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕು. ಪೊಲೀಸ್ ಇಲಾಖೆ ಹಾಗೂ ಜಿಬಿಎ ವಿಧಿಸಿರುವ ನಿಯಮಗಳನ್ನು ಉಲ್ಲಂಘಿಸಿದರೆ ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಎಚ್ಚರಿಕೆ ನೀಡಿದ್ದಾರೆ.

4,000 ಸರ್ಕಾರಿ ಶಿಕ್ಷಕರಿಗೆ ಗುಡ್ ನ್ಯೂಸ್! NPSನಿಂದ OPSಗೆ ಬದಲಾವಣೆಗೆ ರಾಜ್ಯ ಸರ್ಕಾರ ಹಸಿರು ನಿಶಾನೆ

0

ಬೆಂಗಳೂರು: ಕರ್ನಾಟಕದ ಸರ್ಕಾರಿ ಶಾಲೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಸುಮಾರು 4,000 ಶಿಕ್ಷಕರಿಗೆ ರಾಜ್ಯ ಸರ್ಕಾರ ಮಹತ್ವದ ಸಿಹಿಸುದ್ದಿ ನೀಡಿದ್ದು, ಅವರನ್ನು ಹಳೆಯ ಪಿಂಚಣಿ ಯೋಜನೆಗೆ (ಒಪಿಎಸ್‌) ಒಳಪಡಿಸಲು ಕ್ರಮ ಕೈಗೊಂಡಿದೆ. ದಶಕಗಳಿಂದ ಒಪಿಎಸ್‌ಗಾಗಿ ಹೋರಾಟ ನಡೆಸುತ್ತಿದ್ದ ಶಿಕ್ಷಕರಿಗೆ ಸರ್ಕಾರದ ಈ ನಿರ್ಧಾರದಿಂದ ಕೊನೆಗೂ ಜಯ ಸಿಕ್ಕಂತಾಗಿದೆ.

2006ರ ಏಪ್ರಿಲ್‌ 1ಕ್ಕೂ ಮುನ್ನವೇ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದ್ದರೂ, ತಾಂತ್ರಿಕ ಹಾಗೂ ಆಡಳಿತಾತ್ಮಕ ವಿಳಂಬದಿಂದಾಗಿ ಕೆಲ ಶಿಕ್ಷಕರು 2006ರ ನಂತರ ಸೇವೆಗೆ ಸೇರ್ಪಡೆಯಾಗಿದ್ದರು. ಈ ಕಾರಣದಿಂದಾಗಿ ಅವರನ್ನು ಹೊಸ ಪಿಂಚಣಿ ಯೋಜನೆ (ಎನ್‌ಪಿಎಸ್‌) ವ್ಯಾಪ್ತಿಗೆ ಒಳಪಡಿಸಲಾಗಿತ್ತು.

ಆದರೆ, ನೇಮಕಾತಿ ಅಧಿಸೂಚನೆ ಹೊರಡಿಸಿದ ದಿನಾಂಕವನ್ನೇ ಆಧಾರವಾಗಿಟ್ಟುಕೊಂಡು ಹಳೆಯ ಪಿಂಚಣಿ ಯೋಜನೆಯ ಸೌಲಭ್ಯ ನೀಡಬೇಕು ಎಂದು ಶಿಕ್ಷಕರ ಸಂಘಟನೆಗಳು ಹಾಗೂ ನೌಕರರು ಹಲವು ವರ್ಷಗಳಿಂದ ಸರ್ಕಾರಕ್ಕೆ ಮನವಿ ಸಲ್ಲಿಸುತ್ತಿದ್ದರು. ಈ ಸಂಬಂಧ ಕಾನೂನು ಹೋರಾಟವನ್ನೂ ನಡೆಸಲಾಗಿತ್ತು.

ಈ ಕಾನೂನಾತ್ಮಕ ಅಂಶಗಳನ್ನು ಪರಿಶೀಲಿಸಿರುವ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು, 2006ಕ್ಕೂ ಮುನ್ನ ನೇಮಕಾತಿ ಅಧಿಸೂಚನೆ ಹೊರಡಿಸಲಾದ ಹುದ್ದೆಗಳಿಗೆ ಆಯ್ಕೆಯಾದ ಸುಮಾರು 4,000 ಸರ್ಕಾರಿ ಶಿಕ್ಷಕರನ್ನು ಎನ್‌ಪಿಎಸ್‌ನಿಂದ ಒಪಿಎಸ್‌ಗೆ ಬದಲಾಯಿಸಲು ಹಸಿರು ನಿಶಾನೆ ತೋರಿಸಿದೆ ಎಂದು ತಿಳಿದುಬಂದಿದೆ.

ಅರ್ಹ ಶಿಕ್ಷಕರ ಸೇವಾ ಪುಸ್ತಕ ಹಾಗೂ ಸಂಬಂಧಿತ ದಾಖಲೆಗಳನ್ನು ಶೀಘ್ರವಾಗಿ ಪರಿಶೀಲಿಸಿ, ಅಗತ್ಯ ಪ್ರಕ್ರಿಯೆಯನ್ನು ಪೂರ್ಣಗೊಳಿಸುವಂತೆ ಸಂಬಂಧಪಟ್ಟ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಸ್ಪಷ್ಟ ನಿರ್ದೇಶನ ನೀಡಲಾಗಿದೆ.

ಸರ್ಕಾರದ ಈ ನಿರ್ಧಾರದಿಂದಾಗಿ ಸುದೀರ್ಘ ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತಿಯ ಹಂತದಲ್ಲಿರುವ ಸಾವಿರಾರು ಶಿಕ್ಷಕರಿಗೆ ಆರ್ಥಿಕ ಭದ್ರತೆ ದೊರೆಯುವ ನಿರೀಕ್ಷೆಯಿದೆ. ಜೊತೆಗೆ, ನಿವೃತ್ತಿ ಬಳಿಕ ಸಾಮಾಜಿಕ ಹಾಗೂ ಆರ್ಥಿಕ ರಕ್ಷಣೆ ಒದಗಿಸುವಲ್ಲಿ ಈ ಕ್ರಮ ಮಹತ್ವದ್ದಾಗಿದೆ ಎಂದು ಶಿಕ್ಷಕರ ಸಂಘಟನೆಗಳು ಅಭಿಪ್ರಾಯಪಟ್ಟಿವೆ.

ರಾಜ್ಯ ಸರ್ಕಾರಿ ನೌಕರರ ಸಂಘ ಹಾಗೂ ವಿವಿಧ ಶಿಕ್ಷಕರ ಒಕ್ಕೂಟಗಳು ಸರ್ಕಾರದ ಈ ನಿರ್ಧಾರವನ್ನು ಸ್ವಾಗತಿಸಿದ್ದು, ಹಲವು ವರ್ಷಗಳ ಹೋರಾಟಕ್ಕೆ ಫಲ ಸಿಕ್ಕಿದೆ ಎಂದು ಸಂತಸ ವ್ಯಕ್ತಪಡಿಸಿವೆ.

ಎಟಿಎಂ ಒಡೆಯಲು ಯತ್ನಿಸಿದ ಮುಸುಕುಧಾರಿಗಳು; ಸಿಸಿಟಿವಿಯಲ್ಲಿ ಕಳ್ಳರ ಕೃತ್ಯ ಸೆರೆ

0

ಮಡಿಕೇರಿ: ಕೊಡಗು ಜಿಲ್ಲೆಯ ಸೋಮವಾರಪೇಟೆ ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂನಲ್ಲಿ ದರೋಡೆಗೆ ಯತ್ನಿಸಿರುವ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ.

ಶುಕ್ರವಾರ ರಾತ್ರಿ ಸುಮಾರು 2.05ರ ವೇಳೆಗೆ ಕಾರಿನಲ್ಲಿ ಬಂದ ಇಬ್ಬರು ಮುಸುಕುಧಾರಿಗಳು ಎಟಿಎಂ ಒಳಗೆ ನುಗ್ಗಿದ್ದಾರೆ. ಬಳಿಕ ಸಣ್ಣ ಕಬ್ಬಿಣದ ಸಲಾಕೆ ಬಳಸಿ ಎಟಿಎಂ ಯಂತ್ರದ ಮೇಲಿನ ಕವಚವನ್ನು ಮೀಟಿ ಕಳಚಿದ್ದಾರೆ.

ಎಟಿಎಂನ ಮತ್ತೊಂದು ಪದರವನ್ನು ತೆರೆಯಲು ಯತ್ನಿಸುತ್ತಿದ್ದ ವೇಳೆ ಯಾರೋ ಬರುತ್ತಿರುವಂತೆ ಭಾಸವಾದ ಹಿನ್ನೆಲೆಯಲ್ಲಿ ಆತಂಕಗೊಂಡ ಖದೀಮರು ಸ್ಥಳದಿಂದ ಪರಾರಿಯಾಗಿದ್ದಾರೆ.

ಘಟನೆಯ ದೃಶ್ಯಗಳು ಎಟಿಎಂನಲ್ಲಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ. ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ಸೋಮವಾರಪೇಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಗಳ ಪತ್ತೆಗೆ ತನಿಖೆ ಮುಂದುವರಿಸಿದ್ದಾರೆ.

ಕನ್ನಾಳೆ ಬಳಿ ಪ್ರಶ್ನೆಪತ್ರಿಕೆ ಪಡೆದಿದ್ದರಂತೆ 15 ಅಭ್ಯರ್ಥಿಗಳು! KPSC ಹಗರಣದಲ್ಲಿ ಮತ್ತೊಂದು ಸ್ಫೋಟಕ ಮಾಹಿತಿ ಬಯಲು

0

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ (KPSC) ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಅಕ್ರಮ ಪ್ರಕರಣದ ತನಿಖೆ ಮುಂದುವರಿದಂತೆ ಹಲವು ಮಹತ್ವದ ಮಾಹಿತಿಗಳು ಹೊರಬರುತ್ತಿವೆ. ಬಂಧನಕ್ಕೊಳಗಾಗಿರುವ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಗಂಗ್ವಾರ್ ಹಾಗೂ ಪ್ರಕರಣದ ಪ್ರಮುಖ ಆರೋಪಿ ಎನ್ನಲಾಗಿರುವ ಬಸವರಾಜ್ ಕನ್ನಾಳೆ ಅವರ ವಿಚಾರಣೆ ವೇಳೆ ಸುಮಾರು 15 ಅಭ್ಯರ್ಥಿಗಳ ಬಗ್ಗೆಯೂ ಸಿಐಡಿಗೆ ಮಾಹಿತಿ ಲಭ್ಯವಾಗಿದೆ ಎಂದು ತನಿಖಾ ಮೂಲಗಳನ್ನು ಉಲ್ಲೇಖಿಸಿ ವರದಿಯಾಗಿದೆ.

ತನಿಖೆಯ ಪ್ರಕಾರ, ಈ ಅಭ್ಯರ್ಥಿಗಳು ಕನ್ನಾಳೆ ಮೂಲಕ ಪರೀಕ್ಷೆಗೆ ಮುನ್ನವೇ ಪ್ರಶ್ನೆಪತ್ರಿಕೆ ಪಡೆದುಕೊಂಡಿದ್ದರು ಎನ್ನಲಾಗಿದ್ದು, ಈ ಪೈಕಿ ಕೆಲವರು ಸಿಐಡಿ ಅಧಿಕಾರಿಗಳ ಮುಂದೆ ತಮ್ಮ ಪಾತ್ರದ ಕುರಿತು ಮಾಹಿತಿ ನೀಡಿದ್ದಾರೆ ಎಂದು ವರದಿಯಾಗಿದೆ. ಪ್ರಕರಣದಲ್ಲಿ ತಾವು ಹೇಗೆ ಭಾಗಿಯಾಗಿದ್ದೆವು, ತಮ್ಮೊಂದಿಗೆ ಯಾರು ಸಂಪರ್ಕದಲ್ಲಿದ್ದರು, ತಮಗೆ ಯಾವ ರೀತಿಯ ಭರವಸೆ ನೀಡಲಾಗಿತ್ತು ಹಾಗೂ ಹಣದ ವ್ಯವಹಾರ ಹೇಗೆ ನಡೆದಿತ್ತು ಎಂಬುದರ ಕುರಿತು ಅಭ್ಯರ್ಥಿಗಳು ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.

ಈ ಬೆಳವಣಿಗೆಯ ಬೆನ್ನಲ್ಲೇ ಪ್ರಕರಣದ ತನಿಖೆಯ ವ್ಯಾಪ್ತಿಯನ್ನು ಸಿಐಡಿ ಮತ್ತಷ್ಟು ವಿಸ್ತರಿಸಿದೆ. ಈಗಾಗಲೇ ತನಿಖೆಯಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ, ಅಭ್ಯರ್ಥಿಗಳೊಂದಿಗೆ ಮಧ್ಯವರ್ತಿಗಳ ಸಂಪರ್ಕ ಹಾಗೂ ಪರೀಕ್ಷಾ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿರುವ ಆರೋಪಗಳ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯಾಗಿ ಅಭ್ಯರ್ಥಿಗಳಿಗೆ ಮುಂಚಿತವಾಗಿ ನೀಡಲಾಗಿತ್ತು ಎಂಬ ಆರೋಪಗಳನ್ನೂ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.

ಇನ್ನು 5ರಿಂದ 10 ಅಭ್ಯರ್ಥಿಗಳು ಇದೇ ರೀತಿಯಲ್ಲಿ ಅಕ್ರಮದ ಮಾರ್ಗವನ್ನು ಅನುಸರಿಸಿರಬಹುದೆಂಬ ಅನುಮಾನವೂ ಸಿಐಡಿಗೆ ಮೂಡಿದೆ ಎನ್ನಲಾಗಿದೆ. ಹೀಗಾಗಿ ಪ್ರಕರಣದಲ್ಲಿ ಇನ್ನಷ್ಟು ಅಭ್ಯರ್ಥಿಗಳು ಹಾಗೂ ಮಧ್ಯವರ್ತಿಗಳು ಭಾಗಿಯಾಗಿದ್ದಾರೆಯೇ ಎಂಬುದನ್ನು ಪತ್ತೆಹಚ್ಚಲು ತನಿಖೆ ಮುಂದುವರಿದಿದೆ.

KPSC ಪಶುವೈದ್ಯಾಧಿಕಾರಿ ನೇಮಕಾತಿ ಪ್ರಕರಣದಲ್ಲಿ ಈಗಾಗಲೇ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಗಂಗ್ವಾರ್ ಹಾಗೂ ಬಸವರಾಜ್ ಕನ್ನಾಳೆ ಅವರನ್ನು ಸಿಐಡಿ ಬಂಧಿಸಿದ್ದು, ಪ್ರಕರಣದ ತನಿಖೆ ಚುರುಕುಗೊಂಡಿದೆ. ಪ್ರಶ್ನೆಪತ್ರಿಕೆ ಸೋರಿಕೆ ಮಾತ್ರವಲ್ಲದೆ, ಅಭ್ಯರ್ಥಿಗಳ ಹಣದ ವ್ಯವಹಾರ, ಪರೀಕ್ಷಾ ಪ್ರಕ್ರಿಯೆಯಲ್ಲಿನ ಅಕ್ರಮ ಹಾಗೂ ಇತರ ಆರೋಪಿಗಳ ಸಂಪರ್ಕಗಳ ಬಗ್ಗೆಯೂ ತನಿಖೆ ನಡೆಯುತ್ತಿದೆ.

ಮಧ್ಯಪ್ರದೇಶದಲ್ಲಿ ವಿಷಪೂರಿತ ಮದ್ಯ ದುರಂತ! ಮದ್ಯ ಸೇವಿಸಿ 9 ಮಂದಿ ಸಾವು, ಹಲವರು ಅಸ್ವಸ್ಥ

0

ಭೋಪಾಲ್‌: ಮಧ್ಯಪ್ರದೇಶದ ಸಾಗರ್ ಜಿಲ್ಲೆಯಲ್ಲಿ ವಿಷಪೂರಿತ ಮದ್ಯ ಸೇವನೆ ಶಂಕಿತ ಪ್ರಕರಣದಲ್ಲಿ 9 ಮಂದಿ ಮೃತಪಟ್ಟಿರುವ ಘಟನೆ ನಡೆದಿದೆ. ಶನಿವಾರ (ಸೆ.5) ರಾತ್ರಿ ಘೂಘರ್, ನೌರಾಜ್ ಹಾಗೂ ಬರಾಜ್ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕೆಲವರು ಮದ್ಯ ಸೇವಿಸಿದ ಬಳಿಕ ಅಸ್ವಸ್ಥರಾಗಿದ್ದರು ಎನ್ನಲಾಗಿದೆ.

ಅಸ್ವಸ್ಥಗೊಂಡವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದವರ ಪೈಕಿ 9 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಘಟನೆ ಬೆನ್ನಲ್ಲೇ ಸ್ಥಳೀಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ತನಿಖೆ ಆರಂಭಿಸಿದ್ದಾರೆ.

ಮೃತರಿಗೆ ವಿಷಪೂರಿತ ಮದ್ಯವೇ ಕಾರಣ ಎಂಬ ಶಂಕೆ ವ್ಯಕ್ತವಾಗಿದ್ದರೂ, ಇದನ್ನು ಅಧಿಕಾರಿಗಳು ಈವರೆಗೆ ಅಧಿಕೃತವಾಗಿ ದೃಢಪಡಿಸಿಲ್ಲ. ಮರಣೋತ್ತರ ಪರೀಕ್ಷೆಯ ವರದಿ ಬಂದ ಬಳಿಕ ಸಾವಿಗೆ ನಿಖರ ಕಾರಣ ತಿಳಿಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನೂ ಕೆಲವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಆರೋಗ್ಯ ಸ್ಥಿತಿಯ ಕುರಿತು ಮಾಹಿತಿ ನಿರೀಕ್ಷಿಸಲಾಗಿದೆ. ಪ್ರಕರಣದ ತನಿಖೆ ಮುಂದುವರಿದಿರುವ ಹಿನ್ನೆಲೆಯಲ್ಲಿ ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯ ಬಗ್ಗೆಯೂ ಆತಂಕ ವ್ಯಕ್ತವಾಗಿದೆ.

ಈ ಘಟನೆ ಮಧ್ಯಪ್ರದೇಶದಲ್ಲಿ ನಕಲಿ ಅಥವಾ ಅಕ್ರಮ ಮದ್ಯ ತಯಾರಿಕೆ ಹಾಗೂ ಮಾರಾಟದ ಬಗ್ಗೆ ಮತ್ತೊಮ್ಮೆ ಕಳವಳ ಮೂಡಿಸಿದೆ. ಅಸ್ವಸ್ಥಗೊಂಡವರಿಗೆ ಯಾವ ರೀತಿಯ ಮದ್ಯ ಪೂರೈಕೆಯಾಗಿತ್ತು, ಅದರ ಮೂಲ ಏನು ಹಾಗೂ ಸಾವಿಗೆ ನಿಜವಾದ ಕಾರಣವೇನು ಎಂಬುದರ ಕುರಿತು ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.