Home Blog

ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ತಮ್ಮ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ಸಲ್ಲಿಸಿದ್ದು, ರಾಜ್ಯ ರಾಜಕೀಯದಲ್ಲಿ ನಡೆದಿದ್ದ ಹಲವು ದಿನಗಳ ಹೈಡ್ರಾಮಾಗಳಿಗೆ ತೆರೆ ಬಿದ್ದಿದೆ.

ಈ ಮೊದಲು ಮುಂಗಾರು ಅಧಿವೇಶನ ಆರಂಭವಾದ ಬಳಿಕ, ಅಂದರೆ ಆಗಸ್ಟ್ 14ರಂದು ಸಭಾಪತಿ ಸ್ಥಾನ ತೊರೆಯುವುದಾಗಿ ಹೊರಟ್ಟಿ ಘೋಷಿಸಿದ್ದರು. ಆದರೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ನಡೆಸಿದ ಸುದೀರ್ಘ ಮಾತುಕತೆ ಮತ್ತು ಮನವೊಲಿಕೆ ಬಳಿಕ ಅವರು ನಿರ್ಧಾರ ಬದಲಿಸಿ ತಕ್ಷಣವೇ ರಾಜೀನಾಮೆ ಸಲ್ಲಿಸಿದ್ದಾರೆ.

ತಮ್ಮ ರಾಜೀನಾಮೆ ಪತ್ರದಲ್ಲಿ ಯಾವುದೇ ಒತ್ತಡ ಅಥವಾ ಬಲವಂತವಿಲ್ಲದೆ, ಸಂಪೂರ್ಣ ಸ್ವಇಚ್ಛೆಯಿಂದ ಈ ನಿರ್ಧಾರ ಕೈಗೊಂಡಿದ್ದೇನೆ ಎಂದು ಹೊರಟ್ಟಿ ಸ್ಪಷ್ಟಪಡಿಸಿದ್ದಾರೆ. ನೂತನ ಸಭಾಪತಿ ಆಯ್ಕೆಯಾಗುವವರೆಗೆ ಹಂಗಾಮಿ ಸಭಾಪತಿಯಾಗಿ ಮುಂದುವರಿಯಲಿದ್ದಾರೆ.

ವಿಧಾನ ಪರಿಷತ್‌ನಲ್ಲಿ ಕಾಂಗ್ರೆಸ್‌ಗೆ ಸಂಖ್ಯಾಬಲ ಹೆಚ್ಚಿರುವ ಹಿನ್ನೆಲೆಯಲ್ಲಿ ಸಭಾಪತಿ ಸ್ಥಾನಕ್ಕೆ ಸಲೀಂ ಅಹ್ಮದ್ ಹಾಗೂ ಉಪಸಭಾಪತಿ ಸ್ಥಾನಕ್ಕೆ ಉಮಾಶ್ರೀ ಅವರ ಹೆಸರನ್ನು ಕಾಂಗ್ರೆಸ್ ವರಿಷ್ಠರು ಅಂತಿಮಗೊಳಿಸಿರುವ ಮಾಹಿತಿ ಲಭ್ಯವಾಗಿದೆ. ಮುಂದಿನ ದಿನಗಳಲ್ಲಿ ಈ ಆಯ್ಕೆ ಪ್ರಕ್ರಿಯೆಗೆ ಅಧಿಕೃತ ರೂಪ ಸಿಗುವ ಸಾಧ್ಯತೆ ಇದೆ.

‘ಇದು ರಾಜ್ಯದಲ್ಲೇ ಅತ್ಯಂತ ಕೆಟ್ಟ ಹಾಸ್ಟೆಲ್’; ಅಧಿಕಾರಿಗಳಿಗೆ ಉಪಲೋಕಾಯುಕ್ತರ ಚಾಟಿ

0

ಗದಗ: ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯದಲ್ಲಿ 20ಕ್ಕೂ ಹೆಚ್ಚು ಕಂಪ್ಯೂಟರ್‌ಗಳು ಹಾಗೂ 6 ಎಸಿಗಳು ನಾಪತ್ತೆಯಾಗಿರುವ ಗಂಭೀರ ಆರೋಪದ ನಡುವೆ ಉಪಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ಅವರು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿ, ವಸತಿ ನಿಲಯದ ಅವ್ಯವಸ್ಥೆ ಕಂಡು ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡರು.

ಗದಗ ನಗರದ ಸೂರ್ಯನಗರದಲ್ಲಿರುವ ವಸತಿ ನಿಲಯಕ್ಕೆ ಭೇಟಿ ನೀಡಿದ ಉಪಲೋಕಾಯುಕ್ತರು, ವಿದ್ಯಾರ್ಥಿಗಳೊಂದಿಗೆ ನೇರವಾಗಿ ಸಂವಾದ ನಡೆಸಿ ಸಮಸ್ಯೆಗಳನ್ನು ಆಲಿಸಿದರು. ಈ ವೇಳೆ ವಿದ್ಯಾರ್ಥಿಗಳು, ಕಲಿಕೆಗೆ ಅಗತ್ಯವಿದ್ದ 20ಕ್ಕೂ ಹೆಚ್ಚು ಕಂಪ್ಯೂಟರ್‌ಗಳು ಮತ್ತು 6 ಎಸಿಗಳನ್ನು ಅಧಿಕಾರಿಗಳೇ ತೆಗೆದುಕೊಂಡು ಹೋಗಿದ್ದಾರೆ ಎಂದು ಆರೋಪಿಸಿದರು.

ಕಂಪ್ಯೂಟರ್‌ಗಳ ಕೊರತೆಯಿಂದ ಹೊರಗಡೆ ಹಣ ನೀಡಿ ತರಬೇತಿ ಪಡೆಯುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಅಳಲು ತೋಡಿಕೊಂಡರು. ವಸತಿ ನಿಲಯದ ಕೊಠಡಿಗಳಲ್ಲಿನ ತಿಗಣೆ ಕಾಟ, ಸ್ವಚ್ಛತೆಯ ಕೊರತೆ, ವಿದ್ಯಾರ್ಥಿಗಳಿಗೆ ಸಮರ್ಪಕ ಊಟ ಹಾಗೂ ಮೂಲಸೌಕರ್ಯಗಳ ಅಭಾವವನ್ನು ಕಂಡು ಅಸಮಾಧಾನ ವ್ಯಕ್ತಪಡಿಸಿದ ಉಪಲೋಕಾಯುಕ್ತರು, “ಇದು ರಾಜ್ಯದಲ್ಲೇ ಅತ್ಯಂತ ಕೆಟ್ಟ ಹಾಸ್ಟೆಲ್. ನಿಮ್ಮ ಮನೆಯನ್ನೂ ಇದೇ ರೀತಿ ಇಟ್ಟುಕೊಳ್ಳುತ್ತೀರಾ?” ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ನಂದಾ, ವಾರ್ಡನ್ ಹಾಗೂ ಅಧಿಕಾರಿಗಳನ್ನು ಪ್ರಶ್ನಿಸಿ ತರಾಟೆಗೆ ತೆಗೆದುಕೊಂಡರು.

ವಿದ್ಯಾರ್ಥಿಗಳಿಗೆ ಸರ್ಕಾರ ನೀಡಿರುವ ಸೌಲಭ್ಯಗಳು ಸಮರ್ಪಕವಾಗಿ ತಲುಪುತ್ತಿಲ್ಲ. ಕಂಪ್ಯೂಟರ್ ಲ್ಯಾಬ್ ಇದ್ದರೂ ಕಂಪ್ಯೂಟರ್‌ಗಳೇ ಇಲ್ಲದಿರುವುದು, ಗ್ರಂಥಾಲಯದಲ್ಲಿ ಪುಸ್ತಕಗಳ ಕೊರತೆ, ಮೂಲಭೂತ ಸೌಲಭ್ಯಗಳ ನಿರ್ಲಕ್ಷ್ಯ ಗಂಭೀರ ವಿಷಯವಾಗಿದೆ ಎಂದು ಹೇಳಿದರು.

ಈ ಎಲ್ಲ ಬೆಳವಣಿಗೆಗಳ ಕುರಿತು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಆಯುಕ್ತರಿಗೆ ವರದಿ ಸಲ್ಲಿಸುವುದಾಗಿ ತಿಳಿಸಿದ ಅವರು, ಉಪನಿರ್ದೇಶಕಿ, ವಾರ್ಡನ್ ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳನ್ನು ಇಲ್ಲಿಂದ ವರ್ಗಾವಣೆ ಮಾಡುವಂತೆ ಶಿಫಾರಸು ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

ಕರ್ತವ್ಯ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ವಹಿಸಿರುವ ಅಧಿಕಾರಿಗಳ ವಿರುದ್ಧ ಸೂಕ್ತ ದೂರು ದಾಖಲಿಸಿ ಕಾನೂನು ಕ್ರಮ ಜರುಗಿಸುವುದಾಗಿಯೂ ಅವರು ಸ್ಪಷ್ಟಪಡಿಸಿದರು. ಈ ಹಾಸ್ಟೆಲ್‌ನಲ್ಲಿನ ಕಂಪ್ಯೂಟರ್ ಹಾಗೂ ಎಸಿ ನಾಪತ್ತೆ, ವಿದ್ಯಾರ್ಥಿಗಳಿಗೆ ಸೌಲಭ್ಯಗಳ ಕೊರತೆ ಮತ್ತು ಆಡಳಿತಾತ್ಮಕ ಅವ್ಯವಸ್ಥೆ ಕುರಿತು ‘ವಿಜಯಸಾಕ್ಷಿ’ ವೆಬ್ ಪೋರ್ಟಲ್ ‌ನಲ್ಲಿ ಬುಧವಾರ ವಿಸ್ತೃತ ವರದಿ ಮಾಡಿತ್ತು.

ಕೇರಳ, ಕರ್ನಾಟಕ ಸೇರಿ ಹಲವು ಭಾಗಗಳಲ್ಲಿ ಭಾರಿ ಮಳೆ: ಪ್ರವಾಹದ ಎಚ್ಚರಿಕೆ ನೀಡಿದ IMD

0

ನವದೆಹಲಿ: ದೇಶಾದ್ಯಂತ ಮುಂಗಾರು ಮಳೆ ಚುರುಕುಗೊಂಡಿದ್ದು, ಮುಂದಿನ ದಿನಗಳಲ್ಲಿ ಹಲವು ರಾಜ್ಯಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಉತ್ತರ ಭಾರತದಿಂದ ದಕ್ಷಿಣ ಭಾರತದವರೆಗೆ ಹಲವು ಪ್ರದೇಶಗಳಲ್ಲಿ ಮಳೆ ತೀವ್ರಗೊಳ್ಳುವ ಸಾಧ್ಯತೆ ಇದ್ದು, ಕೆಲವೆಡೆ ಪ್ರವಾಹ ಮತ್ತು ಭೂಕುಸಿತದ ಆತಂಕ ಎದುರಾಗಿದೆ.

ವಿಳಂಬವಾಗಿ ಆಗಮಿಸಿದರೂ ಈ ಬಾರಿ ಮುಂಗಾರು ಮಳೆ ಬಿಸಿಲಿನಿಂದ ಕಂಗೆಟ್ಟಿದ್ದ ಜನರಿಗೆ ಹಾಗೂ ಕೊಯ್ಲಿನ ನಿರೀಕ್ಷೆಯಲ್ಲಿದ್ದ ರೈತರಿಗೆ ಪರಿಹಾರ ನೀಡಿದೆ. ಆದರೆ, ನಿರಂತರ ಮಳೆಯಿಂದಾಗಿ ಕೆಲವು ರಾಜ್ಯಗಳಲ್ಲಿ ಭೂ ಕುಸಿತ, ಪ್ರವಾಹ ಹಾಗೂ ಮೂಲಸೌಕರ್ಯ ಸಮಸ್ಯೆಗಳು ಎದುರಾಗುವ ಸಾಧ್ಯತೆ ಇದೆ.

ಐಎಂಡಿ ಮುನ್ಸೂಚನೆಯ ಪ್ರಕಾರ, ದೇಶದ ಹಲವು ಭಾಗಗಳಲ್ಲಿ ಮುಂದಿನ ದಿನಗಳಲ್ಲಿ ತೀವ್ರದಿಂದ ವ್ಯಾಪಕ ಮಳೆಯಾಗಲಿದೆ. ಕೆಲವು ಪ್ರದೇಶಗಳಲ್ಲಿ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಉತ್ತರ ಭಾರತದಲ್ಲಿ ಮಳೆ ಅಬ್ಬರ

ಜಮ್ಮು ಮತ್ತು ಕಾಶ್ಮೀರ, ಲಡಾಖ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಹರಿಯಾಣ, ಚಂಡೀಗಢ, ದೆಹಲಿ ಹಾಗೂ ಪಶ್ಚಿಮ ಉತ್ತರ ಪ್ರದೇಶದಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ಆಗಸ್ಟ್ 9ರಿಂದ 12ರವರೆಗೆ ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್‌ನಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದರೆ, ಆಗಸ್ಟ್ 7ರಿಂದ 12ರವರೆಗೆ ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಹರಿಯಾಣ ಮತ್ತು ದೆಹಲಿಯಲ್ಲಿ ಆಗಸ್ಟ್ 7ರಿಂದ ಮಳೆ ತೀವ್ರಗೊಳ್ಳುವ ಸಾಧ್ಯತೆ ಇದೆ. ಪಶ್ಚಿಮ ರಾಜಸ್ಥಾನದಲ್ಲಿ ಆಗಸ್ಟ್ 8ರಿಂದ 10ರವರೆಗೆ ಹಾಗೂ ಪೂರ್ವ ರಾಜಸ್ಥಾನದಲ್ಲಿ ಆಗಸ್ಟ್ 10 ಮತ್ತು 11ರಂದು ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಹಿಮಾಲಯ ಪ್ರದೇಶದಲ್ಲಿ ನಿರಂತರ ಮಳೆಯಿಂದ ಭೂಕುಸಿತ ಸಂಭವಿಸುವ ಸಾಧ್ಯತೆ ಇದ್ದು, ರಸ್ತೆ ಸಂಪರ್ಕಕ್ಕೆ ಅಡ್ಡಿಯಾಗುವ ಆತಂಕ ಎದುರಾಗಿದೆ.

ಮಧ್ಯ ಭಾರತದಲ್ಲೂ ಮಳೆ ಸಾಧ್ಯತೆ

ಮಧ್ಯ ಪ್ರದೇಶ, ವಿದರ್ಭ ಮತ್ತು ಛತ್ತೀಸ್‌ಗಢದಲ್ಲಿ ಆಗಸ್ಟ್ 7ರಿಂದ 12ರವರೆಗೆ ಮಳೆಯಾಗುವ ಸಾಧ್ಯತೆ ಇದೆ. ಆಗಸ್ಟ್ 9ರಂದು ಮಧ್ಯ ಪ್ರದೇಶ ಮತ್ತು ಛತ್ತೀಸ್‌ಗಢದಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

ಕಡಿಮೆ ಅವಧಿಯಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆಯಿಂದ ತಗ್ಗು ಪ್ರದೇಶಗಳಲ್ಲಿ ನೀರು ನಿಲ್ಲುವ ಹಾಗೂ ಪ್ರವಾಹದಂತಹ ಪರಿಸ್ಥಿತಿ ಎದುರಾಗಬಹುದು ಎಂದು ಎಚ್ಚರಿಸಲಾಗಿದೆ.

ಪೂರ್ವ ಕರಾವಳಿಯಲ್ಲಿ ಮಳೆ ತೀವ್ರತೆ

ಒಡಿಶಾ, ಪಶ್ಚಿಮ ಬಂಗಾಳ, ಜಾರ್ಖಂಡ್, ಬಿಹಾರ, ಸಿಕ್ಕಿಂ ಹಾಗೂ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಒಡಿಶಾದಲ್ಲಿ ಆಗಸ್ಟ್ 7 ಮತ್ತು 8ರಂದು ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು, ನದಿಗಳ ನೀರಿನ ಮಟ್ಟ ಏರಿಕೆಯಿಂದ ಪ್ರವಾಹದ ಆತಂಕ ಎದುರಾಗಿದೆ.

ಈಶಾನ್ಯ ರಾಜ್ಯಗಳಲ್ಲೂ ಮುಂಗಾರು ಚುರುಕು

ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾ ರಾಜ್ಯಗಳಲ್ಲಿ ಆಗಸ್ಟ್ 12ರವರೆಗೆ ಮಳೆಯಾಗುವ ಸಾಧ್ಯತೆ ಇದೆ.

ಅರುಣಾಚಲ ಪ್ರದೇಶದಲ್ಲಿ ಆಗಸ್ಟ್ 7-8 ಹಾಗೂ ಮತ್ತೆ ಆಗಸ್ಟ್ 11-12ರಂದು ಭಾರಿ ಮಳೆಯಾಗುವ ಸಾಧ್ಯತೆ ಇದ್ದರೆ, ಅಸ್ಸಾಂ ಮತ್ತು ಮೇಘಾಲಯದಲ್ಲಿ ಆಗಸ್ಟ್ 7 ಮತ್ತು 12ರಂದು ವ್ಯಾಪಕ ಮಳೆಯಾಗುವ ಮುನ್ಸೂಚನೆ ಇದೆ.

ಪಶ್ಚಿಮ ಕರಾವಳಿಯಲ್ಲೂ ಮಳೆ ಮುಂದುವರಿಕೆ

ಗೋವಾ, ಕೊಂಕಣ ಪ್ರದೇಶಗಳಲ್ಲಿ ಆಗಸ್ಟ್ 7ರಿಂದ 12ರವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಮಧ್ಯ ಮಹಾರಾಷ್ಟ್ರದಲ್ಲಿ ಆಗಸ್ಟ್ 8 ಮತ್ತು 9ರಂದು ಹಾಗೂ ಗುಜರಾತ್‌ನಲ್ಲಿ ಆಗಸ್ಟ್ 7 ಮತ್ತು 11-12ರಂದು ಭಾರಿ ಮಳೆಯಾಗುವ ಸಾಧ್ಯತೆ ಇದೆ.

ಸೌರಾಷ್ಟ್ರ ಮತ್ತು ಕಚ್ ಪ್ರದೇಶಗಳಲ್ಲಿ ಆಗಸ್ಟ್ 9ರಂದು ಕೆಲವು ಕಡೆಗಳಲ್ಲಿ ಭಾರಿ ಮಳೆಯಾಗಬಹುದು ಎಂದು ಐಎಂಡಿ ತಿಳಿಸಿದೆ.

ದಕ್ಷಿಣ ರಾಜ್ಯಗಳಿಗೆ ಭಾರಿ ಮಳೆ ಎಚ್ಚರಿಕೆ

ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ಹಲವು ರಾಜ್ಯಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ. ಆಂಧ್ರಪ್ರದೇಶದ ಕರಾವಳಿ, ರಾಯಲಸೀಮಾ, ತಮಿಳುನಾಡು, ಪುದುಚೇರಿ, ಕೇರಳ, ಮಾಹೆ, ಕರಾವಳಿ ಕರ್ನಾಟಕ, ಉತ್ತರ ಒಳನಾಡು ಕರ್ನಾಟಕ, ದಕ್ಷಿಣ ಒಳನಾಡು ಕರ್ನಾಟಕ ಹಾಗೂ ಲಕ್ಷದ್ವೀಪದಲ್ಲಿ ಮುಂದಿನ ದಿನಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.

ಆಗಸ್ಟ್ 7ರಂದು ಲಕ್ಷದ್ವೀಪ, ಉತ್ತರ ಒಳನಾಡು ಕರ್ನಾಟಕ, ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್‌ನಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದರೆ, ಆಗಸ್ಟ್ 8 ಮತ್ತು 9ರಂದು ಕರಾವಳಿ ಕರ್ನಾಟಕ, ಕೇರಳ ಹಾಗೂ ಮಾಹೆಯಲ್ಲಿ ಮಳೆ ತೀವ್ರಗೊಳ್ಳುವ ಸಾಧ್ಯತೆ ಇದೆ.

ಪ್ರವಾಹದ ಆತಂಕ

ಮುಂದಿನ 24 ಗಂಟೆಗಳಲ್ಲಿ ಕೇರಳ ಮತ್ತು ಮಾಹೆ, ತಮಿಳುನಾಡು, ಪುದುಚೇರಿ, ಕಾರೈಕಲ್ ಹಾಗೂ ಹಿಮಾಚಲ ಪ್ರದೇಶದ ಕೆಲವು ಜಲಾನಯನ ಪ್ರದೇಶಗಳಲ್ಲಿ ಹಠಾತ್ ಪ್ರವಾಹದ ಅಪಾಯವಿದೆ ಎಂದು ಐಎಂಡಿ ಎಚ್ಚರಿಕೆ ನೀಡಿದೆ.

ಕೇರಳದ ವಯನಾಡ್, ಕೋಯಿಕ್ಕೋಡ್, ಮಲಪ್ಪುರಂ, ಪಾಲಕ್ಕಾಡ್, ತ್ರಿಶೂರ್, ಎರ್ನಾಕುಲಂ, ಇಡುಕ್ಕಿ, ಕೊಟ್ಟಾಯಂ ಹಾಗೂ ತಮಿಳುನಾಡಿನ ಕೊಯಮತ್ತೂರು, ನೀಲಗಿರಿ, ದಿಂಡಿಗಲ್, ಥೇಣಿ ಸೇರಿದಂತೆ ಹಲವು ಜಿಲ್ಲೆಗಳನ್ನು ದುರ್ಬಲ ಪ್ರದೇಶಗಳೆಂದು ಗುರುತಿಸಲಾಗಿದೆ.

ಕೇರಳದಲ್ಲಿ ಈಗಾಗಲೇ ಮಳೆ ಪರಿಸ್ಥಿತಿ ಗಂಭೀರವಾಗಿದ್ದು, ವರದಿಗಳ ಪ್ರಕಾರ 26 ಮಂದಿ ಮೃತಪಟ್ಟಿದ್ದಾರೆ. 27 ಸಾವಿರಕ್ಕೂ ಹೆಚ್ಚು ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಿ ಪರಿಹಾರ ಶಿಬಿರಗಳಲ್ಲಿ ಇರಿಸಲಾಗಿದೆ.

ಸಚಿವ ಸಂಪುಟ ಅಸಮಾಧಾನ ಕೆಲವೇ ದಿನಗಳಲ್ಲಿ ಶಮನವಾಗಲಿದೆ: ಸಚಿವ ಲಕ್ಷ್ಮಣ ಸವದಿ ಸ್ಪಷ್ಟನೆ

ಶಿರಸಿ: ಉತ್ತರ ಕನ್ನಡ ಜಿಲ್ಲೆಯಲ್ಲಿ ಉಂಟಾಗಿರುವ ಮಳೆ ಕೊರತೆ ಹಾಗೂ ಬರ ಪರಿಸ್ಥಿತಿಯ ಕುರಿತು ಸಮಗ್ರ ಪರಿಶೀಲನೆ ನಡೆಸಿ, ಶೀಘ್ರದಲ್ಲೇ ಮುಖ್ಯಮಂತ್ರಿ ಅವರಿಗೆ ವರದಿ ಸಲ್ಲಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಲಕ್ಷ್ಮಣ ಸವದಿ ತಿಳಿಸಿದ್ದಾರೆ.

ಶಿರಸಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ಮಳೆ ಅಭಾವದ ಜೊತೆಗೆ ಭೂಕುಸಿತವೂ ಪ್ರಮುಖ ಸಮಸ್ಯೆಯಾಗಿ ಪರಿಣಮಿಸಿದೆ ಎಂದು ಹೇಳಿದರು.

“ಜಿಲ್ಲೆಯ ಪ್ರತಿಯೊಂದು ಇಲಾಖೆಯಿಂದ ಅಗತ್ಯ ಮಾಹಿತಿಗಳು ಹಾಗೂ ವರದಿಗಳನ್ನು ಪಡೆಯಲಾಗುತ್ತಿದೆ. ಸ್ಥಳೀಯ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸಭೆ ನಡೆಸಿ, ಪರಿಸ್ಥಿತಿಗೆ ಅನುಗುಣವಾಗಿ ಸೂಕ್ತ ಪರಿಹಾರ ಕ್ರಮಗಳನ್ನು ಕೈಗೊಳ್ಳಲಾಗುವುದು,” ಎಂದು ಲಕ್ಷ್ಮಣ ಸವದಿ ತಿಳಿಸಿದರು.

ಇದೇ ವೇಳೆ ರಾಜ್ಯ ಸಚಿವ ಸಂಪುಟದಲ್ಲಿ ಉಂಟಾಗಿರುವ ಅಸಮಾಧಾನದ ಕುರಿತು ಪ್ರತಿಕ್ರಿಯಿಸಿದ ಅವರು, ಸಚಿವ ಸ್ಥಾನಗಳ ಸಂಖ್ಯೆ ಸೀಮಿತವಾಗಿರುವುದರಿಂದ ಕೆಲವರಿಗೆ ಅವಕಾಶ ಸಿಗದಿರುವುದು ಸಹಜ ಎಂದು ಹೇಳಿದರು.

“ಸಚಿವ ಸಂಪುಟದಲ್ಲಿ ಕೇವಲ 34 ಸ್ಥಾನಗಳಿಗೆ ಮಾತ್ರ ಅವಕಾಶವಿದೆ. ಸಾಮಾಜಿಕ ನ್ಯಾಯದ ಆಧಾರದ ಮೇಲೆ ಪ್ರಾತಿನಿಧ್ಯ ನೀಡುವಾಗ ಕೆಲವರಿಗೆ ಅವಕಾಶ ತಪ್ಪಬಹುದು. ಹೀಗಾಗಿ ಸಣ್ಣಪುಟ್ಟ ಅಸಮಾಧಾನಗಳು ಇರುವುದು ಸಹಜ. ಆದರೆ ಮುಂದಿನ ನಾಲ್ಕಾರು ದಿನಗಳಲ್ಲಿ ಎಲ್ಲವೂ ಸರಿಯಾಗಲಿದೆ,” ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಹಿರಿಯ ನಾಯಕ ಎಚ್‌.ಕೆ. ಪಾಟೀಲ್ ಅವರು ಯಾವುದೇ ಅಸಮಾಧಾನ ವ್ಯಕ್ತಪಡಿಸಿಲ್ಲ ಎಂದು ಸ್ಪಷ್ಟಪಡಿಸಿದ ಸಚಿವರು, ಸಚಿವ ಸಂಪುಟದ ಬೆಳವಣಿಗೆಗಳು ಶೀಘ್ರದಲ್ಲೇ ಸುಗಮವಾಗಲಿವೆ ಎಂದರು. ಖಾತೆ ಹಂಚಿಕೆ ವಿಳಂಬದ ಕುರಿತು ಮಾತನಾಡಿದ ಲಕ್ಷ್ಮಣ ಸವದಿ, ಹಿಂದೆ ಕೂಡ ಇಂತಹ ಪರಿಸ್ಥಿತಿ ಎದುರಾಗಿತ್ತು ಎಂದು ನೆನಪಿಸಿದರು.

“ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿಯೂ ಎರಡು-ಮೂರು ತಿಂಗಳು ಖಾತೆ ಹಂಚಿಕೆ ಆಗಿರಲಿಲ್ಲ. ಆಗಲೂ ನಾವು ಸಚಿವರಾಗಿ ಕೆಲಸ ಮಾಡಿದ್ದೇವೆ. ಶೀಘ್ರದಲ್ಲೇ ಖಾತೆ ಹಂಚಿಕೆ ಪ್ರಕ್ರಿಯೆ ಪೂರ್ಣಗೊಳ್ಳಲಿದೆ,” ಎಂದು ಹೇಳಿದರು.

ಸಚಿವ ಸ್ಥಾನವೇ ಬೇಕು, ಬೇರೆ ಮಾತೇ ಇಲ್ಲ..! ಹೈಕಮಾಂಡ್‌ ಮನವೊಲಿಕೆಗೂ ಬಗ್ಗದ ಎಂ. ಕೃಷ್ಣಪ್ಪ

ಬೆಂಗಳೂರು: ಸಚಿವ ಸ್ಥಾನ ಕೈತಪ್ಪಿದ ಬಳಿಕ ಕಾಂಗ್ರೆಸ್‌ನಲ್ಲಿ ಅಸಮಾಧಾನದ ಹೊಗೆ ಇನ್ನೂ ತಣ್ಣಗಾಗಿಲ್ಲ. ವಿಜಯನಗರ ಕ್ಷೇತ್ರದ ಶಾಸಕ ಎಂ. ಕೃಷ್ಣಪ್ಪ ತಮ್ಮ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸ್ಪಷ್ಟಪಡಿಸಿದ್ದು, “ನನಗೆ ಸಚಿವ ಸ್ಥಾನ ನೀಡಲೇಬೇಕು, ಅದೂ ಕೂಡಲೇ ನೀಡಬೇಕು. ಇದನ್ನು ಬಿಟ್ಟು ಬೇರೆ ಯಾವುದೇ ಚರ್ಚೆಗೆ ಆಸ್ಪದವೇ ಇಲ್ಲ” ಎಂದು ಖಡಕ್ ಸಂದೇಶ ರವಾನಿಸಿದ್ದಾರೆ.

ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿದ್ದ ಎಂ. ಕೃಷ್ಣಪ್ಪ ಹಾಗೂ ಅವರ ಪುತ್ರ ಪ್ರಿಯಾ ಕೃಷ್ಣ ಅವರನ್ನು ಮನವೊಲಿಸಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಎಐಸಿಸಿ ಕರ್ನಾಟಕ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಈಗಾಗಲೇ ಭೇಟಿ ನೀಡಿ ಮಾತುಕತೆ ನಡೆಸಿದ್ದರು. ಇದರ ಬೆನ್ನಲ್ಲೇ ಇಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಬಿ.ಕೆ. ಹರಿಪ್ರಸಾದ್ ಕೂಡ ಕೃಷ್ಣಪ್ಪ ನಿವಾಸಕ್ಕೆ ತೆರಳಿ ಸಮಾಲೋಚನೆ ನಡೆಸಿದರು.

ಭೇಟಿಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಕೃಷ್ಣಪ್ಪ, “ನಾಯಕರು ಮನೆಗೆ ಬರುತ್ತಾರೆ, ಹೋಗುತ್ತಾರೆ. ಅವರೆಲ್ಲರೂ ನಮ್ಮ ಸ್ನೇಹಿತರು. ಆದರೆ ನನಗೆ ಆಗಿರುವ ಅನ್ಯಾಯಕ್ಕೆ ಪರಿಹಾರ ಒಂದೇ—ಸಚಿವ ಸ್ಥಾನ. ಅದನ್ನು ತಕ್ಷಣ ನೀಡಬೇಕು. ಅದನ್ನು ಬಿಟ್ಟು ಬೇರೆ ಯಾವ ಮಾತುಕತೆಯೂ ಇಲ್ಲ” ಎಂದು ತಮ್ಮ ಬೇಡಿಕೆಯನ್ನು ಪುನರುಚ್ಚರಿಸಿದರು.

ಇನ್ನೊಂದೆಡೆ, ಬಿ.ಕೆ. ಹರಿಪ್ರಸಾದ್ ಮಾತುಕತೆ ಸೌಹಾರ್ದಯುತ ವಾತಾವರಣದಲ್ಲಿ ನಡೆದಿದೆ ಎಂದು ತಿಳಿಸಿದರು. “ಕೃಷ್ಣಪ್ಪ ಅವರೊಂದಿಗೆ ಸುಮಾರು 45-50 ವರ್ಷಗಳ ಆತ್ಮೀಯ ಸಂಬಂಧವಿದೆ. ಕಾಲೇಜು ದಿನಗಳಿಂದಲೂ ನಾವು ಒಟ್ಟಿಗೆ ಕಾಂಗ್ರೆಸ್ ಪಕ್ಷದಲ್ಲಿ ಕೆಲಸ ಮಾಡಿದ್ದೇವೆ. ಹಿರಿಯ ನಾಯಕರಿಗೆ ಸ್ಥಾನಮಾನ ಸಿಗದಿದ್ದಾಗ ನೋವಾಗುವುದು ಸಹಜ. ಅವರ ನೋವನ್ನು ಈಗಾಗಲೇ ರಾಹುಲ್ ಗಾಂಧಿ ಅವರ ಗಮನಕ್ಕೆ ತರಲಾಗಿದೆ” ಎಂದರು.

“ಇನ್ನು ಕೆಲವೇ ದಿನಗಳಲ್ಲಿ ರಾಹುಲ್ ಗಾಂಧಿಯವರೇ ಕೃಷ್ಣಪ್ಪ ಅವರೊಂದಿಗೆ ನೇರವಾಗಿ ಮಾತನಾಡಿ ಸಮಾಧಾನಪಡಿಸಲಿದ್ದಾರೆ ಎಂಬ ವಿಶ್ವಾಸವಿದೆ. ಸಚಿವ ಸ್ಥಾನ ಸಿಗದಿದ್ದರೂ ಪಕ್ಷಕ್ಕೆ ಯಾವುದೇ ಹಾನಿಯಾಗದಂತೆ ಕೃಷ್ಣಪ್ಪ ನಡೆದುಕೊಂಡಿದ್ದಾರೆ. ಅವರಿಗೆ ಯಾವ ಜವಾಬ್ದಾರಿ ಅಥವಾ ಸ್ಥಾನಮಾನ ನೀಡಬೇಕು ಎಂಬುದನ್ನು ಹೈಕಮಾಂಡ್ ತೀರ್ಮಾನಿಸಲಿದೆ” ಎಂದು ಹರಿಪ್ರಸಾದ್ ಹೇಳಿದರು.

ರಾಜಕೀಯ ಬೆಳವಣಿಗೆಗಳ ಕುರಿತು ಪ್ರತಿಕ್ರಿಯಿಸಿದ ಅವರು, “ರಾಜಕೀಯ ಸಾಧ್ಯತೆಗಳ ಆಟ. ಯಾವಾಗ ಏನು ಬೇಕಾದರೂ ಆಗಬಹುದು. ಆದ್ದರಿಂದ ನಾವು ಯಾವಾಗಲೂ ಸಕಾರಾತ್ಮಕವಾಗಿರಬೇಕು. ಖಂಡಿತ ಒಳ್ಳೆಯದಾಗುತ್ತದೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಸ್ಟಾಕ್ ಮಾರ್ಕೆಟ್ ಹೆಸರಲ್ಲಿ ಲಕ್ಷಾಂತರ ವಂಚನೆ: ಕನ್ನಡಕ್ಕೆ ಅವಮಾನಿಸಿದ ಮಹಿಳೆಯಿಂದ ಠಾಣೆ ಎದುರೇ ಕ್ಷಮೆಯಾಚನೆ

ಬೆಂಗಳೂರು: ಸ್ಟಾಕ್ ಮಾರ್ಕೆಟ್‌ನಲ್ಲಿ ಹೆಚ್ಚಿನ ಲಾಭದ ಆಮಿಷವೊಡ್ಡಿ ಸಾರ್ವಜನಿಕರಿಂದ ಲಕ್ಷಾಂತರ ರೂಪಾಯಿ ಹೂಡಿಕೆ ಪಡೆದು ವಂಚನೆ ನಡೆಸಿರುವ ಆರೋಪದ ಬೆನ್ನಲ್ಲೇ, ಹೂಡಿಕೆದಾರರನ್ನು ಅವಾಚ್ಯವಾಗಿ ನಿಂದಿಸಿ ಕನ್ನಡ ಭಾಷೆಗೆ ಅವಮಾನ ಮಾಡಿದ ಮಹಿಳೆಯೊಬ್ಬಳು ಕೊನೆಗೆ ಪೊಲೀಸ್ ಠಾಣೆಯ ಎದುರೇ ಕನ್ನಡಿಗರ ಕ್ಷಮೆ ಕೋರಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಪೀಣ್ಯ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಈಗಾಗಲೇ ಎಫ್‌ಐಆರ್ ದಾಖಲಾಗಿದ್ದು, ವಂಚನೆಗೆ ಒಳಗಾದ ಹೂಡಿಕೆದಾರರು ಕಂಪನಿಯ ಪ್ರತಿನಿಧಿಗಳನ್ನು ಪ್ರಶ್ನಿಸಲು ತೆರಳಿದ್ದರು. ಈ ವೇಳೆ ಪ್ರಿಯಾಂಕ ಎಂಬ ಮಹಿಳೆ ಹೂಡಿಕೆದಾರರೊಂದಿಗೆ ವಾಗ್ವಾದ ನಡೆಸಿ, “ನನಗೆ ಕನ್ನಡ ಗೊತ್ತಿಲ್ಲ, ಏನ್ ಮಾಡ್ತೀರಾ ಮಾಡ್ಕೊಳ್ಳಿ” ಎಂದು ಅವಾಚ್ಯ ಪದಗಳನ್ನು ಬಳಸಿ ಕನ್ನಡ ಭಾಷೆ ಹಾಗೂ ಕನ್ನಡಿಗರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾಳೆ ಎಂಬ ಆರೋಪ ಕೇಳಿಬಂದಿದೆ.

ಘಟನೆ ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗುತ್ತಿದ್ದಂತೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೀಣ್ಯ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ.

ಕಾನೂನು ಕ್ರಮದ ಸಾಧ್ಯತೆ ಹಾಗೂ ಸಾರ್ವಜನಿಕರ ತೀವ್ರ ಆಕ್ರೋಶದ ಹಿನ್ನೆಲೆಯಲ್ಲಿ ಪ್ರಿಯಾಂಕ ಪೊಲೀಸ್ ಠಾಣೆಯ ಮುಂಭಾಗದಲ್ಲೇ ಕನ್ನಡಿಗರ ಕ್ಷಮೆಯಾಚಿಸಿದ್ದಾರೆ. ಇನ್ನು ಮುಂದೆ ಕನ್ನಡ ಭಾಷೆ ಹಾಗೂ ಕನ್ನಡಿಗರ ಬಗ್ಗೆ ಅವಹೇಳನಕಾರಿ ಪದಗಳನ್ನು ಬಳಸುವುದಿಲ್ಲ ಎಂದು ಸಾರ್ವಜನಿಕರ ಎದುರೇ ತಪ್ಪೊಪ್ಪಿಕೊಂಡಿದ್ದಾರೆ.

ಇದೇ ವೇಳೆ, ಸ್ಟಾಕ್ ಮಾರ್ಕೆಟ್ ಹೂಡಿಕೆ ಹೆಸರಿನಲ್ಲಿ ನಡೆದಿರುವ ವಂಚನೆ ಪ್ರಕರಣದ ಹಣಕಾಸು ವ್ಯವಹಾರಗಳ ಕುರಿತು ಪೊಲೀಸರು ತನಿಖೆ ತೀವ್ರಗೊಳಿಸಿದ್ದು, ಇನ್ನಷ್ಟು ಸಂತ್ರಸ್ತರು ಮುಂದೆ ಬರುವ ಸಾಧ್ಯತೆ ಇದೆ.

ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ದರ್ಶನ್‌ಗೆ ಭಾರೀ ಶಾಕ್! ಜೈಲಿನಲ್ಲಿ ಊಟ ಬಿಟ್ಟು ಆತಂಕದಲ್ಲಿ ಕಳೆದ ಡಿ-ಬಾಸ್

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದ ತನಿಖೆಯಲ್ಲಿ ಹೊಸ ಬೆಳವಣಿಗೆಯೊಂದು ನಟ ದರ್ಶನ್ ಮತ್ತು ಅವರ ಗ್ಯಾಂಗ್‌ಗೆ ಸಂಕಷ್ಟ ಹೆಚ್ಚಿಸಿದೆ. ಪ್ರಕರಣದ ಆರೋಪಿ ಹಾಗೂ ದರ್ಶನ್ ಆಪ್ತ ಪ್ರದೋಷ್, ಮಾಫಿ ಸಾಕ್ಷಿಯಾಗಲು ನ್ಯಾಯಾಲಯದ ಮೊರೆ ಹೋಗಿರುವುದು ಪ್ರಕರಣಕ್ಕೆ ಹೊಸ ತಿರುವು ನೀಡಿದೆ. ಈ ಬೆಳವಣಿಗೆಯ ಪರಿಣಾಮ ಜೈಲಿನಲ್ಲಿರುವ ದರ್ಶನ್ ಮೇಲೂ ಸ್ಪಷ್ಟವಾಗಿ ಕಂಡುಬಂದಿದೆ ಎನ್ನಲಾಗಿದೆ.

ಪ್ರದೋಷ್ ಸಲ್ಲಿಸಿರುವ ಅರ್ಜಿಯಿಂದ ಪ್ರಕರಣದಲ್ಲಿ ಆರೋಪಿಗಳ ವಿರುದ್ಧದ ಸಾಕ್ಷ್ಯ ಮತ್ತಷ್ಟು ಬಲವಾಗುವ ಸಾಧ್ಯತೆ ಇದೆ ಎಂದು ಕಾನೂನು ವಲಯದಲ್ಲಿ ಚರ್ಚೆ ನಡೆಯುತ್ತಿದೆ. ಸ್ವತಃ ಆಪ್ತನೇ ನ್ಯಾಯಾಲಯದ ಮುಂದೆ ಸಂಪೂರ್ಣ ಮಾಹಿತಿ ಬಹಿರಂಗಪಡಿಸಿದರೆ ಪ್ರಕರಣದ ದಿಕ್ಕೇ ಬದಲಾಗಬಹುದು ಎಂಬ ಆತಂಕ ಆರೋಪಿಗಳಲ್ಲಿ ಮೂಡಿದೆ.

ಜೈಲು ಮೂಲಗಳ ಮಾಹಿತಿ ಪ್ರಕಾರ, ಈ ಸುದ್ದಿ ತಿಳಿದ ಬಳಿಕ ದರ್ಶನ್ ತೀವ್ರ ಚಿಂತೆಗೆ ಒಳಗಾಗಿದ್ದಾರೆ. ಗುರುವಾರ ರಾತ್ರಿ ಅವರಿಗೆ ನೀಡಿದ ಊಟವನ್ನೂ ಸೇವಿಸದೆ, ಯಾರೊಂದಿಗೂ ಮಾತನಾಡದೇ ಏಕಾಂಗಿಯಾಗಿ ಸಮಯ ಕಳೆದಿದ್ದಾರೆ. ರಾತ್ರಿಯಿಡೀ ನಿದ್ರೆ ಮಾಡದೆ ಜಾಗರಣೆ ಮಾಡಿರುವುದಾಗಿ ತಿಳಿದುಬಂದಿದೆ.

ಶುಕ್ರವಾರ ಬೆಳಗ್ಗೆ ಎಂದಿನಂತೆ ಬ್ಯಾರಕ್‌ನಲ್ಲಿ ನಡೆದಾಡಿದ ಬಳಿಕ ಪತ್ರಿಕೆ ಓದುತ್ತಿದ್ದ ವೇಳೆ ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಕುರಿತ ವರದಿಯನ್ನು ಗಮನಿಸಿದ ದರ್ಶನ್ ಮತ್ತೆ ಮೌನಕ್ಕೆ ಜಾರಿದ್ದಾರೆ ಎನ್ನಲಾಗಿದೆ. ಪ್ರಕರಣದಲ್ಲಿ ದಿನದಿಂದ ದಿನಕ್ಕೆ ನಡೆಯುತ್ತಿರುವ ಬೆಳವಣಿಗೆಗಳು ದರ್ಶನ್‌ಗೆ ಮತ್ತಷ್ಟು ಆತಂಕ ಉಂಟುಮಾಡುತ್ತಿದ್ದು, ಮುಂದಿನ ನ್ಯಾಯಾಂಗ ಪ್ರಕ್ರಿಯೆ ಈಗ ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ.

‘ವರ್ಕ್ ಫ್ರಂ ಹೋಂ’ ಹೆಸರಲ್ಲಿ ಕೋಟಿ ಕೋಟಿ ವಂಚನೆ: ದಂಪತಿ ಪೊಲೀಸ್ ಬಲೆಗೆ

0

ದೇವನಹಳ್ಳಿ: ಸಾಮಾಜಿಕ ಜಾಲತಾಣದಲ್ಲಿ ‘ವರ್ಕ್ ಫ್ರಂ ಹೋಂ’ ಹೆಸರಿನಲ್ಲಿ ಉದ್ಯೋಗದ ಕನಸು ತೋರಿಸಿ ಲಕ್ಷಾಂತರ ರೂಪಾಯಿ ಡೆಪಾಸಿಟ್ ಪಡೆದು ಸಾರ್ವಜನಿಕರಿಗೆ ಕೋಟ್ಯಂತರ ರೂಪಾಯಿ ವಂಚಿಸಿದ್ದ ದಂಪತಿಯನ್ನು ದೇವನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ‘ಕಾಳಿಕಾ ದೇವಿ ಎಂಟರ್‌ಪ್ರೈಸಸ್’ ಹೆಸರಿನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕಿರಣ್ ಮತ್ತು ಆರತಿ ವಿರುದ್ಧ ವಂಚನೆ ಪ್ರಕರಣ ದಾಖಲಾಗಿದೆ.

ಇನ್‌ಸ್ಟಾಗ್ರಾಂ ರೀಲ್ಸ್ ಮೂಲಕ ಮೇಣದ ಬತ್ತಿ, ಡ್ರೈ ಫ್ರೂಟ್ಸ್ ಹಾಗೂ ಅಗರಬತ್ತಿ ಪ್ಯಾಕಿಂಗ್ ಕೆಲಸ ನೀಡುವುದಾಗಿ ಹೇಳುತ್ತಿದ್ದ ಕಿರಣ್, ಒಂದು ಲಕ್ಷ ರೂಪಾಯಿ ಡೆಪಾಸಿಟ್ ಮಾಡಿದರೆ ತಿಂಗಳಿಗೆ 23 ಸಾವಿರ ರೂಪಾಯಿ ಆದಾಯ ಸಿಗುತ್ತದೆ ಎಂದು ಜನರನ್ನು ನಂಬಿಸುತ್ತಿದ್ದ.

ಈ ಮಾತುಗಳನ್ನು ನಂಬಿದ ನೂರಾರು ಜನರು 2 ಲಕ್ಷದಿಂದ 20 ಲಕ್ಷ ರೂಪಾಯಿವರೆಗೆ ಹಣ ಹೂಡಿಕೆ ಮಾಡಿದ್ದರು. ಆದರೆ ಹಣ ಪಡೆದ ಬಳಿಕ ಯಾವುದೇ ಕೆಲಸ ನೀಡದೆ, ಠೇವಣಿ ಹಣವನ್ನೂ ಹಿಂತಿರುಗಿಸದೆ ದಂಪತಿ ತಲೆಮರೆಸಿಕೊಂಡಿದ್ದರು.

ದೇವನಹಳ್ಳಿ, ದೊಡ್ಡಬಳ್ಳಾಪುರ, ಚಿಕ್ಕಜಾಲ, ಕೋಲಾರ ಸೇರಿದಂತೆ ವಿವಿಧ ಭಾಗಗಳ ಸಂತ್ರಸ್ತರು ದೇವನಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ. ಎಫ್‌ಐಆರ್ ದಾಖಲಿಸಿಕೊಂಡ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.

ಸಾರ್ವಜನಿಕರಿಂದ ಸಂಗ್ರಹಿಸಲಾದ ಹಣದ ಮೂಲ, ಹಣದ ವರ್ಗಾವಣೆ ಹಾಗೂ ವಂಚನೆಯ ಜಾಲದ ಕುರಿತು ಪೊಲೀಸರು ಸವಿಸ್ತಾರ ತನಿಖೆ ನಡೆಸುತ್ತಿದ್ದಾರೆ.

ಮಹಿಳಾ ಟಿ20 ಏಷ್ಯಾಕಪ್ ವೇಳಾಪಟ್ಟಿ ಪ್ರಕಟ; ಸೆಪ್ಟೆಂಬರ್ 5ರಂದು ಭಾರತ-ಪಾಕಿಸ್ತಾನ ಹೈವೋಲ್ಟೇಜ್ ಪಂದ್ಯ

0

ದುಬೈ: 2026ರ ಮಹಿಳಾ ಟಿ20 ಏಷ್ಯಾಕಪ್ ಟೂರ್ನಿಯ ವೇಳಾಪಟ್ಟಿಯನ್ನು ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಪ್ರಕಟಿಸಿದೆ. 10ನೇ ಆವೃತ್ತಿಯ ಈ ಪ್ರತಿಷ್ಠಿತ ಟೂರ್ನಿ ಆಗಸ್ಟ್ 28ರಿಂದ ಆರಂಭವಾಗಲಿದ್ದು, ಸೆಪ್ಟೆಂಬರ್ 8ರವರೆಗೆ ನಡೆಯಲಿದೆ. ಟೂರ್ನಿಯ ಎಲ್ಲಾ ಪಂದ್ಯಗಳು ಯುಎಇಯ ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿವೆ.

ಈ ಬಾರಿಯ ಮಹಿಳಾ ಟಿ20 ಏಷ್ಯಾಕಪ್‌ನಲ್ಲಿ ಒಟ್ಟು ಎಂಟು ತಂಡಗಳು ಭಾಗವಹಿಸಲಿವೆ. ತಂಡಗಳನ್ನು ಎರಡು ಗುಂಪುಗಳಾಗಿ ವಿಂಗಡಿಸಲಾಗಿದ್ದು, ಎ ಗುಂಪಿನಲ್ಲಿ ಭಾರತ, ಪಾಕಿಸ್ತಾನ, ಥೈಲ್ಯಾಂಡ್ ಹಾಗೂ ಹಾಂಗ್ ಕಾಂಗ್ ತಂಡಗಳು ಸ್ಥಾನ ಪಡೆದಿವೆ. ಬಿ ಗುಂಪಿನಲ್ಲಿ ಹಾಲಿ ಚಾಂಪಿಯನ್ ಶ್ರೀಲಂಕಾ, ಬಾಂಗ್ಲಾದೇಶ, ಯುಎಇ ಹಾಗೂ ಇಂಡೋನೇಷ್ಯಾ ತಂಡಗಳು ಕಣಕ್ಕಿಳಿಯಲಿವೆ.

ಸೆಪ್ಟೆಂಬರ್ 5ರಂದು ಭಾರತ-ಪಾಕ್ ಕದನ

ಪ್ರತಿ ಗುಂಪಿನಲ್ಲಿರುವ ತಂಡಗಳು ಪರಸ್ಪರ ತಲಾ ಒಂದು ಪಂದ್ಯವನ್ನು ಆಡಲಿವೆ. ಹೀಗಾಗಿ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ಮಹಿಳಾ ತಂಡಗಳು ಗುಂಪು ಹಂತದಲ್ಲೇ ಮುಖಾಮುಖಿಯಾಗಲಿವೆ.

ಭಾರತ-ಪಾಕಿಸ್ತಾನ ನಡುವಿನ ಬಹುನಿರೀಕ್ಷಿತ ಪಂದ್ಯ ಸೆಪ್ಟೆಂಬರ್ 5ರಂದು ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಭಾರತೀಯ ಕಾಲಮಾನ ರಾತ್ರಿ 8 ಗಂಟೆಗೆ ಪಂದ್ಯ ಆರಂಭವಾಗಲಿದ್ದು, ಸಂಜೆ 7.30ಕ್ಕೆ ಟಾಸ್ ನಡೆಯಲಿದೆ.

ಭಾರತ ತನ್ನ ಮೊದಲ ಪಂದ್ಯವನ್ನು ಆಗಸ್ಟ್ 30ರಂದು ಥೈಲ್ಯಾಂಡ್ ವಿರುದ್ಧ ಆಡಲಿದೆ. ಬಳಿಕ ಸೆಪ್ಟೆಂಬರ್ 3ರಂದು ಹಾಂಗ್ ಕಾಂಗ್ ವಿರುದ್ಧ ಸೆಣಸಲಿದೆ. ಸೆಪ್ಟೆಂಬರ್ 5ರಂದು ಪಾಕಿಸ್ತಾನ ವಿರುದ್ಧದ ಹೈವೋಲ್ಟೇಜ್ ಪಂದ್ಯದಲ್ಲಿ ಕಣಕ್ಕಿಳಿಯಲಿದೆ.

ಮಹಿಳಾ ಟಿ20 ಏಷ್ಯಾಕಪ್ ವೇಳಾಪಟ್ಟಿ

  • ಆಗಸ್ಟ್ 28: ಥೈಲ್ಯಾಂಡ್ vs ಹಾಂಗ್ ಕಾಂಗ್
  • ಆಗಸ್ಟ್ 29: ಶ್ರೀಲಂಕಾ vs ಯುಎಇ
  • ಆಗಸ್ಟ್ 30: ಭಾರತ vs ಥೈಲ್ಯಾಂಡ್
  • ಆಗಸ್ಟ್ 31: ಬಾಂಗ್ಲಾದೇಶ vs ಇಂಡೋನೇಷ್ಯಾ
  • ಸೆಪ್ಟೆಂಬರ್ 1: ಪಾಕಿಸ್ತಾನ vs ಥೈಲ್ಯಾಂಡ್
  • ಸೆಪ್ಟೆಂಬರ್ 2: ಶ್ರೀಲಂಕಾ vs ಇಂಡೋನೇಷ್ಯಾ
  • ಸೆಪ್ಟೆಂಬರ್ 3: ಭಾರತ vs ಹಾಂಗ್ ಕಾಂಗ್
  • ಸೆಪ್ಟೆಂಬರ್ 4: ಯುಎಇ vs ಇಂಡೋನೇಷ್ಯಾ
  • ಸೆಪ್ಟೆಂಬರ್ 5: ಪಾಕಿಸ್ತಾನ vs ಭಾರತ
  • ಸೆಪ್ಟೆಂಬರ್ 6: ಶ್ರೀಲಂಕಾ vs ಬಾಂಗ್ಲಾದೇಶ
  • ಸೆಪ್ಟೆಂಬರ್ 7: ಪಾಕಿಸ್ತಾನ vs ಹಾಂಗ್ ಕಾಂಗ್
  • ಸೆಪ್ಟೆಂಬರ್ 8: ಬಾಂಗ್ಲಾದೇಶ vs ಯುಎಇ

ಎಂಟು ತಂಡಗಳು ಪ್ರಶಸ್ತಿಗಾಗಿ ಸೆಣಸಲಿದ್ದು, ಭಾರತ-ಪಾಕಿಸ್ತಾನ ನಡುವಿನ ಪಂದ್ಯ ಟೂರ್ನಿಯ ಪ್ರಮುಖ ಆಕರ್ಷಣೆಗಳಲ್ಲಿ ಒಂದಾಗಲಿದೆ. ದುಬೈನಲ್ಲಿ ನಡೆಯಲಿರುವ ಈ ಟೂರ್ನಿಯತ್ತ ಕ್ರಿಕೆಟ್ ಅಭಿಮಾನಿಗಳ ಚಿತ್ತ ನೆಟ್ಟಿದೆ.

IND vs SL: ಭಾರತ ವಿರುದ್ಧದ ಅಭ್ಯಾಸ ಪಂದ್ಯಕ್ಕೆ ಶ್ರೀಲಂಕಾ ಇಲೆವೆನ್ ತಂಡ ಪ್ರಕಟ!

0

ಭಾರತ ಹಾಗೂ ಶ್ರೀಲಂಕಾ ನಡುವಿನ ಎರಡು ಪಂದ್ಯಗಳ ಟೆಸ್ಟ್ ಸರಣಿ ಆಗಸ್ಟ್ 15ರಿಂದ ಆರಂಭವಾಗಲಿದೆ. ಇದಕ್ಕೂ ಮುನ್ನ ಟೀಂ ಇಂಡಿಯಾ ಮೂರು ದಿನಗಳ ಅಭ್ಯಾಸ ಪಂದ್ಯವನ್ನು ಆಡಲಿದ್ದು, ಆಗಸ್ಟ್ 7ರಿಂದ ಕೊಲಂಬೊದ ಎನ್‌ಸಿಸಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯಲಿದೆ. ಅಭ್ಯಾಸ ಪಂದ್ಯದಲ್ಲಿ ಭಾರತ ತಂಡವು ಶ್ರೀಲಂಕಾ ಕ್ರಿಕೆಟ್ ಇಲೆವೆನ್ ತಂಡವನ್ನು ಎದುರಿಸಲಿದೆ.

ಇದೀಗ ಈ ಅಭ್ಯಾಸ ಪಂದ್ಯಕ್ಕಾಗಿ ಶ್ರೀಲಂಕಾ ಕ್ರಿಕೆಟ್ ಇಲೆವೆನ್ ತಂಡವನ್ನು ಪ್ರಕಟಿಸಲಾಗಿದ್ದು, 15 ಸದಸ್ಯರ ತಂಡಕ್ಕೆ 25 ವರ್ಷದ ಸೋನಲ್ ದಿನುಷಾ ನಾಯಕತ್ವ ವಹಿಸಲಿದ್ದಾರೆ.

ಕಳೆದ ಜೂನ್‌ನಲ್ಲಿ ಬಾಂಗ್ಲಾದೇಶ ವಿರುದ್ಧ ನಡೆದ ತವರಿನ ಟೆಸ್ಟ್ ಸರಣಿಯಲ್ಲಿ ಸೋನಲ್ ದಿನುಷಾ ಶ್ರೀಲಂಕಾ ಪರ ಟೆಸ್ಟ್ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದರು. ಮೂರು ಟೆಸ್ಟ್ ಪಂದ್ಯಗಳಲ್ಲಿ 46.50ರ ಸರಾಸರಿಯಲ್ಲಿ ರನ್ ಗಳಿಸಿರುವ ದಿನುಷಾ, ಬೌಲಿಂಗ್‌ನಲ್ಲೂ ಆರು ವಿಕೆಟ್‌ಗಳನ್ನು ಕಬಳಿಸಿದ್ದಾರೆ.

ಇನ್ನು ವೆಸ್ಟ್ ಇಂಡೀಸ್ ಪ್ರವಾಸದಲ್ಲಿ ಶ್ರೀಲಂಕಾ ತಂಡದ ಭಾಗವಾಗಿದ್ದ ನಿಶಾನ್ ಮದುಷ್ಕ ಕೂಡ ಅಭ್ಯಾಸ ಪಂದ್ಯಕ್ಕೆ ಆಯ್ಕೆಯಾಗಿದ್ದಾರೆ. ತಮ್ಮ ಮೂರು ವರ್ಷಗಳ ಅಂತಾರಾಷ್ಟ್ರೀಯ ಕ್ರಿಕೆಟ್ ವೃತ್ತಿಜೀವನದಲ್ಲಿ ಮದುಷ್ಕ ಎಂಟು ಏಕದಿನ ಹಾಗೂ 12 ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ.

ವೇಗದ ಬೌಲರ್‌ಗಳಾದ ಲಹಿರು ಕುಮಾರ ಹಾಗೂ ವಿಶ್ವ ಫೆರ್ನಾಂಡೊ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಸ್ಪಿನ್ ಬೌಲಿಂಗ್ ಆಲ್‌ರೌಂಡರ್ ರಮೇಶ್ ಮೆಂಡಿಸ್ ಕೂಡ ಶ್ರೀಲಂಕಾ ಕ್ರಿಕೆಟ್ ಇಲೆವೆನ್ ತಂಡದ ಪ್ರಮುಖ ಆಟಗಾರರಾಗಿದ್ದಾರೆ.

ಈ ಅಭ್ಯಾಸ ಪಂದ್ಯವು ಭಾರತ ತಂಡಕ್ಕೆ ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಗೂ ಮುನ್ನ ಆಟಗಾರರ ಫಾರ್ಮ್ ಹಾಗೂ ತಂಡದ ಸಂಯೋಜನೆಯನ್ನು ಪರಿಶೀಲಿಸಲು ಉತ್ತಮ ಅವಕಾಶವಾಗಲಿದೆ. ಆಗಸ್ಟ್ 15ರಿಂದ ಆರಂಭವಾಗಲಿರುವ ಟೆಸ್ಟ್ ಸರಣಿಗೂ ಮುನ್ನ ಆಟಗಾರರು ತಮ್ಮ ಸಾಮರ್ಥ್ಯ ಪ್ರದರ್ಶಿಸಲು ಈ ಪಂದ್ಯ ಮಹತ್ವದ್ದಾಗಿದೆ.

ಶ್ರೀಲಂಕಾ ಕ್ರಿಕೆಟ್ ಇಲೆವೆನ್ ತಂಡ

ನಿಶಾನ್ ಮದುಷ್ಕ, ರವಿಂದು ರಶಾಂತ, ಪಸಿಂದು ಸೂರಿಯಬಂಡಾರ, ಪವನ್ ರತ್ನಾಯಕೆ, ಅಹಾನ್ ವಿಕ್ರಮಸಿಂಘೆ, ಸೋನಲ್ ದಿನುಷಾ (ನಾಯಕ), ಅಂಜಲ ಬಂಡಾರ (ವಿಕೆಟ್‌ಕೀಪರ್), ನಿಪುನ್ ಧನಂಜಯ, ಲಹಿರು ಕುಮಾರ, ವಿಶ್ವ ಫೆರ್ನಾಂಡೊ, ಅಸಂಕ ಮನೋಜ್, ಇಸಿತಾ ವಿಜೆಸುಂದರ, ರಮೇಶ್ ಮೆಂಡಿಸ್, ಕೇಸರ ನುವಂತ ಹಾಗೂ ದಿಲುಂ ಸುದೀರ.

ಭಾರತ ಟೆಸ್ಟ್ ತಂಡ

ಶುಭ್‌ಮನ್ ಗಿಲ್ (ನಾಯಕ), ಕೆ.ಎಲ್. ರಾಹುಲ್ (ಉಪನಾಯಕ), ರಿಷಭ್ ಪಂತ್, ಧ್ರುವ್ ಜುರೆಲ್, ಯಶಸ್ವಿ ಜೈಸ್ವಾಲ್, ದೇವದತ್ ಪಡಿಕ್ಕಲ್, ಸಾಯಿ ಸುದರ್ಶನ್, ರವೀಂದ್ರ ಜಡೇಜಾ, ಕುಲ್ದೀಪ್ ಯಾದವ್, ಮಾನವ್ ಸುತಾರ್, ಸಾರಂಶ್ ಜೈನ್, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ಗುರ್ನೂರ್ ಬ್ರಾರ್ ಹಾಗೂ ಆಖಿಬ್ ನಬಿ.