Home Blog

ಬೈಕ್ ನಲ್ಲಿ ಅಕ್ರಮ ಮದ್ಯ ಸಾಗಾಟ: ಆರೋಪಿ ಶಿಕ್ಷೆ ಖಾಯಂಗೊಳಿಸಿದ ಹೈಕೋರ್ಟ್

ಬೆಂಗಳೂರು: ದ್ವಿಚಕ್ರ ವಾಹನದಲ್ಲಿ ಅಕ್ರಮವಾಗಿ ಮದ್ಯ ಸಾಗಣೆ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಿಗೆ ವಿಧಿಸಲಾಗಿದ್ದ ಒಂದು ವರ್ಷದ ಶಿಕ್ಷೆಯನ್ನು ಕರ್ನಾಟಕ ಹೈಕೋರ್ಟ್ ಎತ್ತಿಹಿಡಿದಿದೆ. ಜೊತೆಗೆ ಆರೋಪಿಗಳು ಸಲ್ಲಿಸಿದ್ದ ಕ್ರಿಮಿನಲ್ ಮರುಪರಿಶೀಲನಾ ಅರ್ಜಿಯನ್ನು ವಜಾಗೊಳಿಸಿದೆ.

ಆರೋಪಿಗಳಾದ ಮಂಜನಾಯ್ಕ ಹಾಗೂ ಶಂಕರ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ವಿ. ಶ್ರೀಷಾನಂದ ಅವರ ಏಕಸದಸ್ಯ ಪೀಠ ಈ ಆದೇಶ ನೀಡಿದೆ.

ಪ್ರಕರಣದಲ್ಲಿ ಪೊಲೀಸರು ವಶಪಡಿಸಿಕೊಂಡಿದ್ದ ಭಾರಿ ಪ್ರಮಾಣದ ಮದ್ಯಕ್ಕೆ ಸಂಬಂಧಿಸಿದಂತೆ ಯಾವುದೇ ಸೂಕ್ತ ದಾಖಲೆಗಳನ್ನು ಆರೋಪಿಗಳು ಒದಗಿಸಿಲ್ಲ. ಅಲ್ಲದೆ ಸಾಕ್ಷಿಗಳ ಹೇಳಿಕೆಗಳು ಸಹ ಪ್ರಾಸಿಕ್ಯೂಷನ್ ಪರವಾಗಿಯೇ ಸಾಬೀತಾಗಿವೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ರಸ್ತೆಯಲ್ಲಿ ಸಂಚರಿಸುವ ವಾಹನಗಳ ತಪಾಸಣೆ ನಡೆಸಲು ಪೊಲೀಸರಿಗೆ ಪ್ರತ್ಯೇಕ ಸರ್ಚ್ ವಾರಂಟ್ ಕಡ್ಡಾಯವಲ್ಲ ಎಂದು ಪೀಠ ಸ್ಪಷ್ಟಪಡಿಸಿದೆ.

ಪ್ರಕರಣದ ತನಿಖೆ ನಡೆಸಿದ ಪೊಲೀಸರು ಹಾಗೂ ನ್ಯಾಯಾಲಯದಲ್ಲಿ ಸಾಕ್ಷ್ಯ ನೀಡಿದ ಸಾಕ್ಷಿಗಳಿಗೆ ಆರೋಪಿಗಳ ವಿರುದ್ಧ ಯಾವುದೇ ವೈಯಕ್ತಿಕ ದ್ವೇಷವಿಲ್ಲ. ಹೀಗಾಗಿ ಆರೋಪಿಗಳನ್ನು ಉದ್ದೇಶಪೂರ್ವಕವಾಗಿ ಸಿಲುಕಿಸಲಾಗಿದೆ ಎಂಬ ವಾದವನ್ನು ಒಪ್ಪಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ತಿಳಿಸಿದೆ.

ಜೊತೆಗೆ ಶಿಕ್ಷೆಗೆ ಗುರಿಯಾದ ಆರೋಪಿಗಳು 2026ರ ಜೂನ್ 5ರೊಳಗೆ ವಿಚಾರಣಾ ನ್ಯಾಯಾಲಯದ ಮುಂದೆ ಶರಣಾಗಬೇಕು ಎಂದು ಆದೇಶಿಸಲಾಗಿದೆ.

ಪ್ರಕರಣದ ಹಿನ್ನೆಲೆ

2014ರ ಸೆಪ್ಟೆಂಬರ್ 14ರಂದು ಖಚಿತ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ನಡೆಸಿದ್ದರು. ಈ ವೇಳೆ ಹರಪನಹಳ್ಳಿ ಸಮೀಪ ಮೋಟಾರ್‌ಸೈಕಲ್‌ನಲ್ಲಿ ಯಾವುದೇ ಪರವಾನಗಿ ಇಲ್ಲದೆ ಪ್ಲಾಸ್ಟಿಕ್ ಚೀಲಗಳಲ್ಲಿ ಸುಮಾರು ₹13,200 ಮೌಲ್ಯದ ರಾಜಾ ವಿಸ್ಕಿ ಪ್ಯಾಕೆಟ್‌ಗಳನ್ನು ಸಾಗಿಸುತ್ತಿದ್ದ ಆರೋಪಿಗಳನ್ನು ಬಂಧಿಸಲಾಗಿತ್ತು.

ಬಳಿಕ ತನಿಖೆ ನಡೆಸಿದ ಪೊಲೀಸರು ಕರ್ನಾಟಕ ಅಬಕಾರಿ ಕಾಯ್ದೆಯ ಸೆಕ್ಷನ್ 32 ಮತ್ತು 34ರಡಿ ಆರೋಪಪಟ್ಟಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ್ದ ಅರಸೀಕೆರೆಯ ಜೆಎಂಎಫ್‌ಸಿ ನ್ಯಾಯಾಲಯ ಆರೋಪಿಗಳಿಗೆ ತಲಾ ಒಂದು ವರ್ಷದ ಸರಳ ಕಾರಾಗೃಹ ಶಿಕ್ಷೆ ಹಾಗೂ ₹10 ಸಾವಿರ ದಂಡ ವಿಧಿಸಿತ್ತು.

ಈ ತೀರ್ಪನ್ನು ಹಾಸನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವೂ ಎತ್ತಿಹಿಡಿದಿತ್ತು. ಇದನ್ನು ಪ್ರಶ್ನಿಸಿ ಆರೋಪಿಗಳು ಹೈಕೋರ್ಟ್‌ಗೆ ಮರುಪರಿಶೀಲನಾ ಅರ್ಜಿ ಸಲ್ಲಿಸಿದ್ದರು.

ವಿಚಾರಣೆ ವೇಳೆ ಆರೋಪಿಗಳ ಪರ ವಕೀಲರು, ದಾಳಿಗೂ ಮುನ್ನ ಪೊಲೀಸರು ಸರ್ಚ್ ವಾರಂಟ್ ಪಡೆಯದ ಕಾರಣ ವಿಚಾರಣಾ ನ್ಯಾಯಾಲಯದ ಆದೇಶ ರದ್ದುಪಡಿಸಬೇಕು ಎಂದು ವಾದಿಸಿದ್ದರು. ಆದರೆ ಈ ವಾದವನ್ನು ಹೈಕೋರ್ಟ್ ತಳ್ಳಿ ಹಾಕಿದೆ.

ಮಧ್ಯಪ್ರಾಚ್ಯ ಯುದ್ಧದ ಎಫೆಕ್ಟ್: ರಾಜ್ಯದಲ್ಲಿ 38 ಸಾವಿರ ಟನ್ ರಸಗೊಬ್ಬರ ಕೊರತೆ

ಬೆಂಗಳೂರು: ಮಧ್ಯಪ್ರಾಚ್ಯ ಪ್ರದೇಶದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮ ರಾಜ್ಯದಲ್ಲಿ ರಸಗೊಬ್ಬರ ಕೊರತೆ ಉಂಟಾಗಿದ್ದು, ರೈತರು ಸಂಕಷ್ಟ ಎದುರಿಸುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದ್ದಾರೆ.

ರಾಜ್ಯದಲ್ಲಿ ಪ್ರಸ್ತುತ ಸುಮಾರು 38 ಸಾವಿರ ಟನ್ ರಸಗೊಬ್ಬರ ಕೊರತೆ ಎದುರಾಗಿದ್ದು, ಇದರಲ್ಲಿ 14 ಸಾವಿರ ಟನ್ ಯೂರಿಯಾ ಅಭಾವವೂ ಸೇರಿದೆ ಎಂದು ಸಚಿವರು ಮಾಹಿತಿ ನೀಡಿದರು. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಅಧಿಕಾರಿಗಳು ಕೇಂದ್ರ ಸರ್ಕಾರದ ಅಧಿಕಾರಿಗಳೊಂದಿಗೆ ನಿರಂತರ ಚರ್ಚೆ ನಡೆಸುತ್ತಿದ್ದಾರೆ ಎಂದರು.

ರೈತರು ರಸಗೊಬ್ಬರ ಬಳಕೆಯನ್ನು ಸಾಧ್ಯವಾದಷ್ಟು ಕಡಿಮೆ ಮಾಡಿ ಪರ್ಯಾಯ ಕೃಷಿ ವಿಧಾನಗಳನ್ನು ಅನುಸರಿಸುವಂತೆ ಸಲಹೆ ನೀಡಲಾಗಿದೆ. ಜೊತೆಗೆ ರಸಗೊಬ್ಬರ ದಾಸ್ತಾನು, ಅಕ್ರಮ ವಿತರಣೆ ಹಾಗೂ ಬೇರೆಡೆಗೆ ತಿರುಗಿಸುವಿಕೆ ತಡೆಯಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿಗಾವಹಿಸಲು ಸೂಚಿಸಲಾಗಿದೆ ಎಂದು ಹೇಳಿದರು.

ಜೂನ್ ತಿಂಗಳಲ್ಲಿ ಮುಂಗಾರು ಆರಂಭವಾಗುವ ನಿರೀಕ್ಷೆಯಿರುವುದರಿಂದ ರಸಗೊಬ್ಬರ ಪೂರೈಕೆಯನ್ನು ಸಮರ್ಪಕವಾಗಿ ನಿರ್ವಹಿಸಲು ಸರ್ಕಾರ ಸಿದ್ಧತೆ ನಡೆಸುತ್ತಿದೆ. ನಿಜವಾದ ರೈತರಿಗೆ ಮಾತ್ರ ರಸಗೊಬ್ಬರ ದೊರೆಯುವಂತೆ FRUITS ಐಡಿ ಆಧಾರಿತ ವಿತರಣಾ ವ್ಯವಸ್ಥೆ ಜಾರಿಗೆ ತರಲಾಗಿದೆ ಎಂದು ಸಚಿವರು ತಿಳಿಸಿದರು.

ಕೇಂದ್ರ ಸರ್ಕಾರ ರಾಜ್ಯಕ್ಕೆ ಒಟ್ಟು 30.05 ಲಕ್ಷ ಮೆಟ್ರಿಕ್ ಟನ್ ವಿವಿಧ ರೀತಿಯ ರಸಗೊಬ್ಬರ ಹಂಚಿಕೆ ಮಾಡಿದೆ. ಇದರಲ್ಲಿ 11.10 ಲಕ್ಷ ಮೆಟ್ರಿಕ್ ಟನ್ ಯೂರಿಯಾ, 4 ಲಕ್ಷ ಮೆಟ್ರಿಕ್ ಟನ್ ಡಿಎಪಿ, 2.12 ಲಕ್ಷ ಮೆಟ್ರಿಕ್ ಟನ್ ಎಂಒಪಿ, 11.88 ಲಕ್ಷ ಮೆಟ್ರಿಕ್ ಟನ್ ಕಾಂಪ್ಲೆಕ್ಸ್ ರಸಗೊಬ್ಬರ ಹಾಗೂ 0.95 ಲಕ್ಷ ಮೆಟ್ರಿಕ್ ಟನ್ ಎಸ್‌ಎಸ್‌ಪಿ ಸೇರಿವೆ.

ಆದರೆ ಈ ವರ್ಷ ಯೂರಿಯಾದ ಆರಂಭಿಕ ದಾಸ್ತಾನು ಪ್ರಮಾಣವು ಹಿಂದಿನ ವರ್ಷಗಳಿಗೆ ಹೋಲಿಸಿದರೆ ಗಣನೀಯವಾಗಿ ಕುಸಿದಿದೆ. 2023ರಲ್ಲಿ 3.91 ಲಕ್ಷ ಮೆಟ್ರಿಕ್ ಟನ್ ಹಾಗೂ 2024ರಲ್ಲಿ 5.41 ಲಕ್ಷ ಮೆಟ್ರಿಕ್ ಟನ್ ದಾಸ್ತಾನು ಇದ್ದರೆ, ಈ ವರ್ಷ ಅದು ಕೇವಲ 2.80 ಲಕ್ಷ ಮೆಟ್ರಿಕ್ ಟನ್‌ಗೆ ಇಳಿಕೆಯಾಗಿದೆ ಎಂದು ಸಚಿವರು ಹೇಳಿದರು.

ಏಪ್ರಿಲ್ ತಿಂಗಳಲ್ಲಿ ರಾಜ್ಯವು 4.02 ಲಕ್ಷ ಮೆಟ್ರಿಕ್ ಟನ್ ರಸಗೊಬ್ಬರ ಬೇಡಿಕೆ ಇಟ್ಟಿದ್ದರೂ, ಕೇಂದ್ರದಿಂದ ಕೇವಲ 2.54 ಲಕ್ಷ ಮೆಟ್ರಿಕ್ ಟನ್ ಪೂರೈಕೆಯಾಗಿದೆ. ಪರಿಣಾಮವಾಗಿ 1.48 ಲಕ್ಷ ಮೆಟ್ರಿಕ್ ಟನ್ ಕೊರತೆ ಉಂಟಾಗಿದೆ. ಇದರಲ್ಲಿ 0.38 ಲಕ್ಷ ಮೆಟ್ರಿಕ್ ಟನ್ ಡಿಎಪಿ ಹಾಗೂ 0.14 ಲಕ್ಷ ಮೆಟ್ರಿಕ್ ಟನ್ ಯೂರಿಯಾ ಕೊರತೆ ಸೇರಿದೆ.

ಮೇ ತಿಂಗಳಲ್ಲಿ 4.54 ಲಕ್ಷ ಮೆಟ್ರಿಕ್ ಟನ್ ರಸಗೊಬ್ಬರ ಅಗತ್ಯವಿದ್ದರೂ, ಇದುವರೆಗೆ ಕೇವಲ 1.77 ಲಕ್ಷ ಮೆಟ್ರಿಕ್ ಟನ್ ಮಾತ್ರ ಪೂರೈಕೆಯಾಗಿದೆ. ಇನ್ನೂ 2.77 ಲಕ್ಷ ಮೆಟ್ರಿಕ್ ಟನ್ ರಸಗೊಬ್ಬರ ಬಾಕಿಯಿದ್ದು, ಇದರಲ್ಲಿ 0.65 ಲಕ್ಷ ಮೆಟ್ರಿಕ್ ಟನ್ ಯೂರಿಯಾ ಹಾಗೂ 0.78 ಲಕ್ಷ ಮೆಟ್ರಿಕ್ ಟನ್ ಡಿಎಪಿ ಪೂರೈಕೆಯಾಗಬೇಕಿದೆ.

ಈ ಪರಿಸ್ಥಿತಿ ಶೀಘ್ರದಲ್ಲೇ ಸುಧಾರಿಸದಿದ್ದರೆ ಮುಂಗಾರು ಬಿತ್ತನೆ ಅವಧಿಯಲ್ಲಿ ರೈತರು ಗಂಭೀರ ಸಮಸ್ಯೆ ಎದುರಿಸಬೇಕಾಗಬಹುದು ಎಂದು ಕೃಷಿ ಸಚಿವರು ಎಚ್ಚರಿಸಿದ್ದಾರೆ.

‘ದುಬಾರೆ’ ದುರಂತಕ್ಕೆ ಅರಣ್ಯ ಇಲಾಖೆ ಹೊಣೆ? ತಜ್ಞರ ಎಚ್ಚರಿಕೆ ನಿರ್ಲಕ್ಷ್ಯಕ್ಕೆ ಎರಡು ಜೀವ ಬಲಿ

0

ಕೊಡಗು: ದುಬಾರೆ ಆನೆ ಶಿಬಿರದಲ್ಲಿ ನಡೆದ ಆನೆಗಳ ಕಾದಾಟದ ದುರಂತ ಇದೀಗ ಅರಣ್ಯ ಇಲಾಖೆಯ ನಿರ್ಲಕ್ಷ್ಯದ ವಿರುದ್ಧ ಭಾರೀ ಚರ್ಚೆಗೆ ಕಾರಣವಾಗಿದೆ. ಪ್ರವಾಸಿ ಮಹಿಳೆ ಸಾವಿನ ಬೆನ್ನಲ್ಲೇ ಗಾಯಗೊಂಡಿದ್ದ ‘ಮಾರ್ತಾಂಡ’ ಸಾಕಾನೆಯೂ ಮೃತಪಟ್ಟಿದ್ದು, 2019ರಲ್ಲೇ ತಜ್ಞರ ಸಮಿತಿ ನೀಡಿದ್ದ ಎಚ್ಚರಿಕೆ ವರದಿ ಇದೀಗ ಮತ್ತೆ ಬೆಳಕಿಗೆ ಬಂದಿದೆ.

ಹೈಕೋರ್ಟ್ ಸೂಚನೆಯಂತೆ ರಚನೆಯಾಗಿದ್ದ ತಜ್ಞರ ಸಮಿತಿ, ದುಬಾರೆ ಶಿಬಿರದಲ್ಲಿ ಪ್ರವಾಸಿಗರ ಅತಿಯಾದ ಒತ್ತಡದಿಂದ ಆನೆಗಳ ನಡವಳಿಕೆಯಲ್ಲಿ ಅಪಾಯಕಾರಿ ಬದಲಾವಣೆ ಆಗುತ್ತಿದೆ ಎಂದು ಎಚ್ಚರಿಸಿತ್ತು. ಪ್ರವಾಸಿಗರನ್ನು ಆನೆಗಳ ತೀರಾ ಹತ್ತಿರಕ್ಕೆ ಬಿಡಬಾರದು ಹಾಗೂ ಶಿಬಿರದಲ್ಲಿ ಗರಿಷ್ಠ 15 ಆನೆಗಳಷ್ಟೇ ಇರಬೇಕು ಎಂದು ಶಿಫಾರಸು ಮಾಡಲಾಗಿತ್ತು.

ಆದರೆ ಈ ಎಲ್ಲಾ ಶಿಫಾರಸುಗಳನ್ನು ಅರಣ್ಯ ಇಲಾಖೆ ಕಡೆಗಣಿಸಿದೆ ಎನ್ನಲಾಗಿದೆ. ಸದ್ಯ ದುಬಾರೆ ಶಿಬಿರದಲ್ಲಿ 30ಕ್ಕೂ ಹೆಚ್ಚು ಆನೆಗಳನ್ನು ಇರಿಸಲಾಗಿದ್ದು, ಪ್ರವಾಸಿಗರ ಸಂಖ್ಯೆಯೂ ನಿಯಂತ್ರಣ ತಪ್ಪಿದೆ ಎಂಬ ಆರೋಪ ಕೇಳಿಬಂದಿದೆ.

ಮೇ 18ರಂದು ಕಾವೇರಿ ನದಿಯಲ್ಲಿ ಸ್ನಾನ ಮಾಡಿಸುವ ವೇಳೆ ‘ಕಂಜನ್’ ಮತ್ತು ‘ಮಾರ್ತಾಂಡ’ ಆನೆಗಳ ನಡುವೆ ಭೀಕರ ಕಾದಾಟ ನಡೆದಿತ್ತು. ಈ ವೇಳೆ ನಿಯಂತ್ರಣ ತಪ್ಪಿದ ಮಾರ್ತಾಂಡ ಆನೆ ಪ್ರವಾಸಿಗರಿದ್ದ ಪ್ರದೇಶಕ್ಕೆ ದೌಡಾಯಿಸಿದ್ದು, ಚೆನ್ನೈ ಮೂಲದ ತುಳಸಿ ಎಂಬ ಮಹಿಳೆ ಮೃತಪಟ್ಟಿದ್ದರು.

ತೀವ್ರ ಆಂತರಿಕ ಗಾಯಗಳಿಂದ ಬಳಲುತ್ತಿದ್ದ ಮಾರ್ತಾಂಡ ಆನೆ ಕೂಡ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದೆ. ಎರಡು ಜೀವ ಬಲಿಯಾದ ಬಳಿಕ ಅರಣ್ಯ ಇಲಾಖೆಯ ಕಾರ್ಯವೈಖರಿ ಮತ್ತು ಸುರಕ್ಷತಾ ಕ್ರಮಗಳ ಬಗ್ಗೆ ಸಾರ್ವಜನಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.

‘ಹಪ್ತಾ’ಗಾಗಿ ಬೆದರಿಸಿದ್ದ ರೌಡಿ: ಮಗಳ ಮದುವೆ ಮಧ್ಯೆಯೇ ಚರ್ಚ್‌ಗೆ ನುಗ್ಗಿ ಅರೆಸ್ಟ್ ಮಾಡಿದ ಪೊಲೀಸರು

0

ಕೋಲಾರ: ಉದ್ಯಮಿಯೊಬ್ಬರಿಗೆ ಬೆದರಿಕೆ ಹಾಕಿ ಹಪ್ತಾ ವಸೂಲಿ ಮಾಡುತ್ತಿದ್ದ ಆರೋಪದ ಮೇಲೆ ಗಡಿಪಾರು ಶಿಕ್ಷೆಗೆ ಒಳಗಾಗಿದ್ದ ರೌಡಿಶೀಟರ್ ಸ್ಟಾನ್ಲಿಯನ್ನು ಪೊಲೀಸರು ಮಗಳ ಮದುವೆ ಮಂಟಪದಿಂದಲೇ ಬಂಧಿಸಿರುವ ಘಟನೆ ಕೆಜಿಎಫ್ ನಗರದಲ್ಲಿ ನಡೆದಿದೆ.

ಸುಸೈಪಾಳ್ಯಂ ಪ್ರದೇಶದ ಚರ್ಚ್‌ನಲ್ಲಿ ಮಗಳ ಮದುವೆ ಕಾರ್ಯಕ್ರಮ ನಡೆಯುತ್ತಿದ್ದ ವೇಳೆ ಆಂಡರ್ಸನ್‌ಪೇಟೆ ಠಾಣೆ ಪೊಲೀಸರು ದಿಢೀರ್ ದಾಳಿ ನಡೆಸಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಈ ಸಿನಿಮೀಯ ಕಾರ್ಯಾಚರಣೆಯ ವಿಡಿಯೋ ಈಗ ವೈರಲ್ ಆಗಿದೆ.

ಪೊಲೀಸ್ ಮಾಹಿತಿ ಪ್ರಕಾರ, ಮದುವೆ ಪೆಂಡಾಲ್ ಹಾಗೂ ಡೆಕೋರೇಷನ್ ಕೆಲಸ ಮಾಡುತ್ತಿದ್ದ ಮೊಹಮ್ಮದ್ ಸಕ್ಲೇನ್ ಎಂಬ ಉದ್ಯಮಿಗೆ ಸ್ಟಾನ್ಲಿ ಹಣಕ್ಕಾಗಿ ಬೆದರಿಕೆ ಹಾಕುತ್ತಿದ್ದ. ‘ಮಗಳ ಮದುವೆಗೆ ಹಣ ಕೊಡಲೇಬೇಕು’ ಎಂದು ಒತ್ತಡ ಹೇರುತ್ತಿದ್ದಾನೆ ಎಂದು ಸಂತ್ರಸ್ತ ಪೊಲೀಸರಿಗೆ ದೂರು ನೀಡಿದ್ದರು.

ಈಗಾಗಲೇ ಗಡಿಪಾರು ಆಗಿದ್ದ ಸ್ಟಾನ್ಲಿ ಕಾನೂನು ಉಲ್ಲಂಘಿಸಿ ಮತ್ತೆ ನಗರದೊಳಗೆ ಪ್ರವೇಶಿಸಿದ್ದಲ್ಲದೆ, ಸಾರ್ವಜನಿಕರಿಗೆ ಕಿರುಕುಳ ನೀಡಿ ಹಪ್ತಾ ವಸೂಲಿಗೆ ಇಳಿದಿದ್ದಾನೆ ಎಂಬ ಆರೋಪ ಕೇಳಿಬಂದಿತ್ತು.

ಕೆಜಿಎಫ್ ಎಸ್‌ಪಿ ಶಿವಾಂಶು ರಜಪೂತ್ ಸೂಚನೆ ಮೇರೆಗೆ ಪೊಲೀಸರು ತಕ್ಷಣ ಕಾರ್ಯಾಚರಣೆ ನಡೆಸಿ, ಮದುವೆ ಕಾರ್ಯಕ್ರಮ ನಡೆಯುತ್ತಿದ್ದ ಚರ್ಚ್‌ಗೆ ನುಗ್ಗಿ ಆರೋಪಿಯನ್ನು ಬಂಧಿಸಿದ್ದಾರೆ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಮುಂದುವರಿಸಿದ್ದಾರೆ.

“ಇದೇ ಕೊನೆಯ ಅವಕಾಶ”: GBA ಚುನಾವಣೆಗೆ 3 ತಿಂಗಳ ಕಾಲಾವಕಾಶ ನೀಡಿದ ಸುಪ್ರೀಂ ಕೋರ್ಟ್

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ವ್ಯಾಪ್ತಿಯ ಐದು ನಗರ ಪಾಲಿಕೆಗಳ ಚುನಾವಣೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರ ಸಲ್ಲಿಸಿದ್ದ ಕಾಲಾವಕಾಶ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಾಲಯ, ಜಿಬಿಎ ಚುನಾವಣೆಯನ್ನು ನಡೆಸಲು ಆಗಸ್ಟ್ 31ರವರೆಗೆ ಮೂರು ತಿಂಗಳ ಹೆಚ್ಚುವರಿ ಸಮಯ ನೀಡಿದೆ.

ಈ ಹಿಂದೆ ಜೂನ್ 30ರೊಳಗೆ ಚುನಾವಣೆ ನಡೆಸುವಂತೆ ಸುಪ್ರೀಂ ಕೋರ್ಟ್ ರಾಜ್ಯ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿತ್ತು. ಆದರೆ ಚುನಾವಣಾ ಸಿದ್ಧತೆಗಳಿಗೆ ಹೆಚ್ಚಿನ ಸಮಯ ಅಗತ್ಯವಿದೆ ಎಂದು ಹೇಳಿ ರಾಜ್ಯ ಸರ್ಕಾರ ಹಾಗೂ ಜಿಬಿಎ ಮುಖ್ಯ ಆಯುಕ್ತರು ಹೆಚ್ಚುವರಿ ಗಡುವು ಕೋರಿ ಅರ್ಜಿ ಸಲ್ಲಿಸಿದ್ದರು.

ವಿಚಾರಣೆ ವೇಳೆ ರಾಜ್ಯ ಸರ್ಕಾರದ ಪರವಾಗಿ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ವಾದ ಮಂಡಿಸಿದರು. “ಚುನಾವಣೆ ನಡೆಸಲು ಅಗತ್ಯ ಬಜೆಟ್ ಮೀಸಲಿಡಲಾಗಿದೆ. ಆದರೆ ಸಿಬ್ಬಂದಿ ಕೊರತೆ ಸೇರಿದಂತೆ ಕೆಲವು ಆಡಳಿತಾತ್ಮಕ ಸಮಸ್ಯೆಗಳಿವೆ. ಹೀಗಾಗಿ 60 ದಿನಗಳ ಹೆಚ್ಚುವರಿ ಕಾಲಾವಕಾಶ ಅಗತ್ಯವಿದೆ” ಎಂದು ನ್ಯಾಯಾಲಯಕ್ಕೆ ತಿಳಿಸಿದರು.

ಇದೇ ವೇಳೆ ಅರ್ಜಿದಾರರ ಪರ ವಕೀಲರು ಸರ್ಕಾರದ ಮನವಿಗೆ ವಿರೋಧ ವ್ಯಕ್ತಪಡಿಸಿದರು. “ಈ ಹಿಂದೆ ಹಲವಾರು ಬಾರಿ ಕಾಲಾವಕಾಶ ನೀಡಲಾಗಿದೆ. ಆದರೂ ಸರ್ಕಾರ ಚುನಾವಣೆ ನಡೆಸಲು ವಿಳಂಬ ಮಾಡುತ್ತಿದೆ. ಹೆಚ್ಚಿನ ಸಮಯ ನೀಡಬಾರದು” ಎಂದು ವಾದ ಮಂಡಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಸುಪ್ರೀಂ ಕೋರ್ಟ್ ಪೀಠ, “ಸರ್ಕಾರ ಚುನಾವಣೆಯನ್ನು ಮುಂದೂಡಲು ಯತ್ನಿಸುತ್ತಿರುವಂತೆ ಕಾಣುತ್ತಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿತು. ಆದರೆ ಅಂತಿಮವಾಗಿ ಆಗಸ್ಟ್ 31ರವರೆಗೆ ಗಡುವು ವಿಸ್ತರಿಸಿ, “ಇದೇ ಕೊನೆಯ ಕಾಲಾವಕಾಶ” ಎಂದು ಕಟ್ಟುನಿಟ್ಟಿನ ಎಚ್ಚರಿಕೆ ನೀಡಿತು.

ರಾಜ್ಯದಲ್ಲಿ ಎಸ್‌ಐಆರ್ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ನಡೆಯುತ್ತಿರುವುದು ಹಾಗೂ ಸಿಬ್ಬಂದಿ ಕೊರತೆ ಇರುವುದನ್ನು ರಾಜ್ಯ ಚುನಾವಣಾ ಆಯೋಗ ತನ್ನ ಅಫಿಡವಿಟ್‌ನಲ್ಲಿ ಉಲ್ಲೇಖಿಸಿದೆ. ಈ ತೀರ್ಪಿನೊಂದಿಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ ಸ್ಥಳೀಯ ಸಂಸ್ಥೆಗಳ ಚುನಾವಣೆ ಮತ್ತೊಮ್ಮೆ ಮುಂದೂಡಲ್ಪಟ್ಟಿದ್ದು, ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.

ಸಾಲದ ಹಣ ವಾಪಸ್ ಕೇಳಿದ್ದಕ್ಕೆ ಹಲ್ಲೆ ಆರೋಪ: ಹೆಚ್. ವಿಶ್ವನಾಥ್ ವಿರುದ್ಧ FIR ದಾಖಲು

ಮೈಸೂರು:  ಸಾಲದ ಹಣ ವಾಪಸ್ ಕೇಳಲು ಹೋದ ವ್ಯಕ್ತಿಗೆ ಹಲ್ಲೆ ನಡೆಸಿದ ಆರೋಪದ ಮೇಲೆ ವಿಧಾನ ಪರಿಷತ್ ಸದಸ್ಯ ಹೆಚ್. ವಿಶ್ವನಾಥ್ ವಿರುದ್ಧ ಮೈಸೂರಿನ ದೇವರಾಜ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಕಾಂಗ್ರೆಸ್ ಮುಖಂಡ ಕೋಟೆಹುಂಡಿ ಮಹದೇವು ನೀಡಿದ ದೂರಿನ ಆಧಾರದ ಮೇಲೆ ನ್ಯಾಯಾಲಯದ ಆದೇಶದಂತೆ ಪ್ರಕರಣ ದಾಖಲಿಸಲಾಗಿದೆ.  2013ರಲ್ಲಿ ಹೆಚ್. ವಿಶ್ವನಾಥ್ ಅವರು ಸಂಸದರಾಗಿದ್ದ ಸಂದರ್ಭದಲ್ಲಿ, ಎಂಟಿಬಿ ನಾಗರಾಜ್ ಅವರ ಮೂಲಕ ವಿಶ್ವನಾಥ್ ಹಾಗೂ ಅವರ ಪುತ್ರ ಅಮಿತ್ ದೇವರಹಟ್ಟಿ ಅವರಿಗೆ 55 ಲಕ್ಷ ರೂಪಾಯಿ ಸಾಲವಾಗಿ ನೀಡಲಾಗಿತ್ತು.

ಸಾಲ ಪಡೆದ ಹಣವನ್ನು ಹಿಂತಿರುಗಿಸುವುದಾಗಿ ಹೇಳಿದ್ದರೂ, ಹಲವು ವರ್ಷಗಳಿಂದ ಹಣ ವಾಪಸ್ ನೀಡದೇ ಸತಾಯಿಸುತ್ತಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. 2026ರ ಫೆಬ್ರವರಿಯಲ್ಲಿ ಮೈಸೂರಿನ ಜಲದರ್ಶಿನಿ ಅತಿಥಿ ಗೃಹದಲ್ಲಿ ವಿಶ್ವನಾಥ್ ಇದ್ದ ವೇಳೆ, ಸಾಲದ ಹಣ ಕುರಿತು ಮಾತನಾಡಲು ಕೋಟೆಹುಂಡಿ ಮಹದೇವು ತೆರಳಿದ್ದರು. ಈ ಸಂದರ್ಭದಲ್ಲಿ ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೈಯಿಂದ ತಲೆಗೆ ಹೊಡೆದು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

ಈ ಸಂಬಂಧ ಕೋಟೆಹುಂಡಿ ಮಹದೇವು ಮೊದಲು ದೇವರಾಜ ಪೊಲೀಸ್ ಠಾಣೆಯಲ್ಲಿ ಎನ್‌ಸಿಆರ್ ದಾಖಲಿಸಿದ್ದರು. ಬಳಿಕ ನ್ಯಾಯಾಲಯದ ಮೊರೆ ಹೋಗಿ ಪ್ರಕರಣ ದಾಖಲಿಸಲು ಆದೇಶ ಪಡೆದಿದ್ದಾರೆ. ನ್ಯಾಯಾಲಯದ ನಿರ್ದೇಶನದಂತೆ ಇದೀಗ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಕೈ ಕೊಟ್ಟ ಪ್ರೇಯಸಿ: ಹೈಟೆನ್ಷನ್ ಕಂಬ ಏರಿ ಪ್ರೇಮಿಯ ಹುಚ್ಚಾಟ

ಆನೇಕಲ್: ಲವ್ ಬ್ರೇಕಪ್ ಹಿನ್ನೆಲೆ ಮನನೊಂದ ಯುವಕನೊಬ್ಬ ಹೈಟೆನ್ಷನ್ ವಿದ್ಯುತ್ ಕಂಬ ಏರಿ ಆತ್ಮಹತ್ಯೆ ಬೆದರಿಕೆ ಹಾಕಿದ ಘಟನೆ ಆನೇಕಲ್ ತಾಲೂಕಿನ ಚಿನ್ನಯ್ಯನಪಾಳ್ಯದಲ್ಲಿ ಭಾರೀ ಆತಂಕ ಸೃಷ್ಟಿಸಿದೆ.

ಸೋಮಶೇಖರ್ ಎಂಬ ಯುವಕ ಕಳೆದ ಮೂರು ವರ್ಷಗಳಿಂದ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ. ಆದರೆ ಯುವತಿ ಮದುವೆಗೆ ನಿರಾಕರಿಸಿ ದೂರವಾಗಲು ಮುಂದಾದ ಹಿನ್ನೆಲೆ ಆತ ಆಕ್ರೋಶಗೊಂಡಿದ್ದಾನೆ ಎನ್ನಲಾಗಿದೆ.

ಘಟನೆಯ ದಿನ ಮೊದಲು ಮನೆಯ ಮೇಲ್ಛಾವಣಿಯ ಶೀಟ್‌ಗಳನ್ನು ಒಡೆದು ರೌಡಿಸಂ ನಡೆಸಿದ ಆತ, ಬಳಿಕ ಸಮೀಪದ ಹೈಟೆನ್ಷನ್ ವಿದ್ಯುತ್ ಕಂಬ ಏರಿದ್ದಾನೆ. ‘ನಾನು ಪ್ರೀತಿಸಿದ ಹುಡುಗಿ ಸ್ಥಳಕ್ಕೆ ಬರಬೇಕು, ಇಲ್ಲದಿದ್ದರೆ ಕೆಳಗೆ ಇಳಿಯಲ್ಲ’ ಎಂದು ಕಂಬದ ಮೇಲಿಂದಲೇ ಕೂಗಾಡಿದ್ದಾನೆ.

ಯುವಕನ ಈ ಕೃತ್ಯದಿಂದ ಗ್ರಾಮದಲ್ಲಿ ಕೆಲಕಾಲ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದರು.

ವಿದ್ಯುತ್ ಅವಘಡ ಸಂಭವಿಸುವ ಭೀತಿ ಹಿನ್ನೆಲೆ ತಕ್ಷಣ ವಿದ್ಯುತ್ ಸಂಪರ್ಕ ಸ್ಥಗಿತಗೊಳಿಸಲಾಯಿತು. ಬಳಿಕ ಅಧಿಕಾರಿಗಳು ಮತ್ತು ಸ್ಥಳೀಯರು ಸಾಕಷ್ಟು ಮನವೊಲಿಕೆ ನಡೆಸಿ ಯುವಕನನ್ನು ಸುರಕ್ಷಿತವಾಗಿ ಕೆಳಗಿಳಿಸಿದರು.

ಪ್ರೇಮ ವೈಫಲ್ಯದಿಂದ ಭಾವೋದ್ವೇಗಕ್ಕೆ ಒಳಗಾದ ಯುವಕನ ಈ ಹುಚ್ಚಾಟ ಕೆಲಕಾಲ ಇಡೀ ಪ್ರದೇಶದಲ್ಲಿ ಆತಂಕದ ವಾತಾವರಣ ನಿರ್ಮಿಸಿತ್ತು.

ಇರಾನ್ ಯುದ್ಧದಲ್ಲಿ ಅಮೆರಿಕಕ್ಕೆ ಭಾರೀ ಹೊಡೆತ? ‘ಆಪರೇಷನ್ ಎಪಿಕ್ ಫ್ಯೂರಿ’ಯಲ್ಲಿ 42 ಯುದ್ಧ ವಿಮಾನಗಳಿಗೆ ಹಾನಿ

ವಾಷಿಂಗ್ಟನ್: ಇರಾನ್ ವಿರುದ್ಧ ಅಮೆರಿಕ ನಡೆಸಿದ್ದ ‘ಆಪರೇಷನ್ ಎಪಿಕ್ ಫ್ಯೂರಿ’ ವೇಳೆ ಅಮೆರಿಕದ ಅತ್ಯಾಧುನಿಕ ಯುದ್ಧ ವಿಮಾನಗಳು ಮತ್ತು ಡ್ರೋನ್‌ಗಳಿಗೆ ಭಾರೀ ಹಾನಿಯಾಗಿದೆ ಎಂಬ ಸ್ಫೋಟಕ ಮಾಹಿತಿ ಬಹಿರಂಗವಾಗಿದೆ. ಅಮೆರಿಕ ಕಾಂಗ್ರೆಸ್‌ಗೆ ಸಂಬಂಧಿಸಿದ ಸಿಆರ್‌ಎಸ್ ವರದಿ ಪ್ರಕಾರ, ಕಾರ್ಯಾಚರಣೆಯ ಅವಧಿಯಲ್ಲಿ ಕನಿಷ್ಠ 42 ಯುದ್ಧ ವಿಮಾನಗಳು ನಾಶವಾಗಿವೆ ಅಥವಾ ಗಂಭೀರ ಹಾನಿಗೊಳಗಾಗಿವೆ ಎನ್ನಲಾಗಿದೆ.

ವರದಿಯ ಪ್ರಕಾರ, ಅಮೆರಿಕ 4 F-15E ಸ್ಟ್ರೈಕ್ ಈಗಲ್ ಫೈಟರ್ ಜೆಟ್‌, 1 F-35A ಲೈಟ್ನಿಂಗ್ II, 7 KC-135 ಸ್ಟ್ರಾಟೋಟ್ಯಾಂಕರ್‌, 2 MC-130J ಕಮಾಂಡೋ ವಿಮಾನ, 1 E-3 ಸೆಂಟ್ರಿ AWACS, 1 HH-60W ಹೆಲಿಕಾಪ್ಟರ್ ಸೇರಿದಂತೆ ಹಲವು ಪ್ರಮುಖ ಯುದ್ಧೋಪಕರಣಗಳನ್ನು ಕಳೆದುಕೊಂಡಿದೆ. ಜೊತೆಗೆ 24 MQ-9 ರೀಪರ್ ಡ್ರೋನ್ ಹಾಗೂ 1 MQ-4C ಟ್ರೈಟಾನ್ ಕಣ್ಗಾವಲು ಡ್ರೋನ್ ಕೂಡ ನಾಶವಾಗಿವೆ ಎಂದು ಹೇಳಲಾಗಿದೆ.

ಈ ಹಾನಿಗೆ ಇರಾನ್ ಪ್ರತಿದಾಳಿ, ತಾಂತ್ರಿಕ ವೈಫಲ್ಯ ಹಾಗೂ ಯುದ್ಧ ಪರಿಸ್ಥಿತಿಯಲ್ಲಿನ ಗೊಂದಲ ಪ್ರಮುಖ ಕಾರಣಗಳಾಗಿರಬಹುದು ಎಂದು ವರದಿ ಉಲ್ಲೇಖಿಸಿದೆ. ಅಮೆರಿಕ ರಕ್ಷಣಾ ಇಲಾಖೆ ಇನ್ನೂ ಸಂಪೂರ್ಣ ಅಧಿಕೃತ ಲೆಕ್ಕ ನೀಡಿಲ್ಲ ಎಂಬ ಸಂಗತಿಯೂ ವರದಿಯಲ್ಲಿ ಉಲ್ಲೇಖವಾಗಿದೆ.

ಪೆಂಟಗನ್ ಕಾರ್ಯಕಾರಿ ನಿಯಂತ್ರಕ ಜೂಲ್ಸ್ ಡಬ್ಲ್ಯೂ ಹರ್ಸ್ಟ್ III, ಇರಾನ್ ವಿರುದ್ಧದ ಯುದ್ಧ ಕಾರ್ಯಾಚರಣೆಯ ವೆಚ್ಚ ಈಗಾಗಲೇ 29 ಬಿಲಿಯನ್ ಡಾಲರ್‌ಗೆ ಏರಿಕೆಯಾಗಿದೆ ಎಂದು ಅಮೆರಿಕ ಸಂಸದೀಯ ಸಮಿತಿಗೆ ತಿಳಿಸಿದ್ದಾರೆ. ವಿಮಾನಗಳ ದುರಸ್ತಿ ಮತ್ತು ಬದಲಿ ವ್ಯವಸ್ಥೆ ವೆಚ್ಚವೇ ದೊಡ್ಡ ಹೊರೆ ಆಗಿದೆ ಎಂದು ಅವರು ಹೇಳಿದ್ದಾರೆ.

‘ಆಪರೇಷನ್ ಎಪಿಕ್ ಫ್ಯೂರಿ’ ಅಮೆರಿಕದ ಸೈನಿಕ ಸಾಮರ್ಥ್ಯಕ್ಕೂ ಆರ್ಥಿಕತೆಯ ಮೇಲೂ ಭಾರೀ ಪರಿಣಾಮ ಬೀರಿದೆ ಎಂಬ ಚರ್ಚೆ ಇದೀಗ ಜಾಗತಿಕ ಮಟ್ಟದಲ್ಲಿ ಜೋರಾಗಿದೆ.

ನನ್ನ ನಷ್ಟದಿಂದ ಹಣ ಸಂಪಾದನೆ ಮಾಡಬೇಡಿ: ಪಾಪರಾಜಿಗಳ ಮೇಲೆ ಸಲ್ಮಾನ್ ಖಾನ್ ಗರಂ

ಆಸ್ಪತ್ರೆ ಆವರಣದಲ್ಲಿ ಪಾಪರಾಜಿಗಳ ವರ್ತನೆಗೆ ಬಾಲಿವುಡ್ ನಟ ಸಲ್ಮಾನ್ ಖಾನ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಆಪ್ತರೊಬ್ಬರನ್ನು ಭೇಟಿ ಮಾಡಿ ಹೊರಬರುತ್ತಿದ್ದ ವೇಳೆ ಫೋಟೋಗ್ರಾಫರ್‌ಗಳು ‘ಮಾತೃಭೂಮಿ’ ಸಿನಿಮಾ ಹೆಸರನ್ನು ಕೂಗಿ ಅವರ ಖಾಸಗಿತನಕ್ಕೆ ಅಡ್ಡಿಪಡಿಸಿದ್ದು, ಈ ವೇಳೆ ಸಲ್ಮಾನ್ ಕೋಪಗೊಂಡಿದ್ದಾರೆ.

ವೈರಲ್ ವಿಡಿಯೋದಲ್ಲಿ ಸಲ್ಮಾನ್ ಖಾನ್ ಪಾಪರಾಜಿಗಳ ಬಳಿ ತೆರಳಿ, ‘ನಿಮಗೆ ತಲೆ ಕೆಟ್ಟಿದೆಯೇ?’ ಎಂದು ಪ್ರಶ್ನಿಸುತ್ತಿರುವುದು ಕಾಣಿಸಿಕೊಂಡಿದೆ. ಘಟನೆ ಬಳಿಕ ಅವರು ಸೋಶಿಯಲ್ ಮೀಡಿಯಾದಲ್ಲೂ ಸಿಡಿದೆದ್ದಿದ್ದಾರೆ.

‘ಆಸ್ಪತ್ರೆಯ ಮುಂದೆ ನಿಂತು ನನ್ನ ನೋವನ್ನು ಕಂಟೆಂಟ್ ಮಾಡಿಕೊಳ್ಳಬೇಡಿ. ನನ್ನ ನಷ್ಟದಿಂದ ಹಣ ಸಂಪಾದನೆ ಮಾಡಬೇಡಿ. ನಿಮಗೆ ಸಿನಿಮಾ ಮುಖ್ಯವೇ ಅಥವಾ ಮನುಷ್ಯನ ಜೀವ ಮುಖ್ಯವೇ?’ ಎಂದು ಸಲ್ಮಾನ್ ಖಾನ್ ಪ್ರಶ್ನಿಸಿದ್ದಾರೆ.

ಅಲ್ಲದೆ, ‘ಮುಂದಿನ ಬಾರಿ ನನ್ನ ಕಷ್ಟದ ಸಮಯದಲ್ಲಿ ಇದೇ ರೀತಿ ವರ್ತಿಸಿ ನೋಡಿ. ನಾನು ಸುಮ್ಮನಿರುವ ವ್ಯಕ್ತಿ ಅಲ್ಲ’ ಎಂದು ಕಠಿಣ ಎಚ್ಚರಿಕೆ ನೀಡಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಬಿಷ್ಣೋಯ್ ಗ್ಯಾಂಗ್ ಬೆದರಿಕೆ ಹಿನ್ನೆಲೆ ಸಲ್ಮಾನ್ ಖಾನ್ ಕಠಿಣ ಭದ್ರತೆಯಲ್ಲಿ ಸಂಚರಿಸುತ್ತಿದ್ದಾರೆ. ಈ ನಡುವೆಯೇ ಆಸ್ಪತ್ರೆ ಮುಂದೆ ನಡೆದ ಘಟನೆ ಬಾಲಿವುಡ್ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.

ಸದ್ಯ ಸಲ್ಮಾನ್ ‘ಮಾತೃಭೂಮಿ: ಮೇ ವಾರ್ ರೆಸ್ಟ್ ಇನ್ ಪೀಸ್’ ಹಾಗೂ ನಯನತಾರಾ ಜೊತೆ ನಟಿಸುತ್ತಿರುವ ‘SVC63’ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ.

ನೇತ್ರಾವತಿ ನದಿಯಲ್ಲಿ ಈಜಲು ಹೋಗಿ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು!

ಮಂಗಳೂರು: ನೇತ್ರಾವತಿ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ನೀರಲ್ಲಿ ಮುಳುಗಿ ಮೃತಪಟ್ಟಿರುವ ದುರ್ಘಟನೆ ಬೆಳ್ತಂಗಡಿ ತಾಲೂಕಿನ ಪಜಿರಡ್ಕ ಸಮೀಪ ನಡೆದಿದೆ.

ಮೃತ ವಿದ್ಯಾರ್ಥಿಯನ್ನು ಬೆಳಗಾವಿ ಜಿಲ್ಲೆಯ ಗೋಕಾಕ್ ಮೂಲದ ಶ್ರೀಪೂರ್ಣ (21) ಎಂದು ಗುರುತಿಸಲಾಗಿದೆ. ಅವರು ಉಜಿರೆಯ ಖಾಸಗಿ ಇಂಜಿನಿಯರಿಂಗ್ ಕಾಲೇಜೊಂದರಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಯಾಗಿ ವ್ಯಾಸಂಗ ಮಾಡುತ್ತಿದ್ದರು.

ಮಂಗಳವಾರ ಸಂಜೆ ಸುಮಾರು 4 ಗಂಟೆ ವೇಳೆಗೆ ಶ್ರೀಪೂರ್ಣ ಸೇರಿದಂತೆ ಏಳು ಮಂದಿ ಸ್ನೇಹಿತರ ತಂಡ ನೇತ್ರಾವತಿ ನದಿಗೆ ಈಜಲು ತೆರಳಿತ್ತು. ವೇಳೆ ಶ್ರೀಪೂರ್ಣ ನೀರಿನಲ್ಲಿ ಮುಳುಗಿದರೆಂದು ತಿಳಿದುಬಂದಿದೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳೀಯರು, ಅಗ್ನಿಶಾಮಕ ದಳ ಸಿಬ್ಬಂದಿ ಹಾಗೂ ಶೌರ್ಯ ವಿಪತ್ತು ನಿರ್ವಹಣಾ ಪಡೆ ಶೋಧ ಕಾರ್ಯ ಆರಂಭಿಸಿದೆ. ವಿದ್ಯಾರ್ಥಿಯ ಮೃತದೇಹ ಪತ್ತೆಗಾಗಿ ಕಾರ್ಯಾಚರಣೆ ಮುಂದುವರಿದಿದೆ.

ಬೆಳ್ತಂಗಡಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

error: Content is protected !!