Home Blog

ಪುರಸಭೆ ಜಾಗದಲ್ಲೇ ಗೋಹತ್ಯೆ ಆರೋಪ!

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಪಟ್ಟಣದ ಹಳೆ ಆಸಾರ ಓಣಿಯ ಪುರಸಭೆ ಜಾಗೆಯಲ್ಲಿ ಪರವಾನಗಿ ಇಲ್ಲದೆ ಅಕ್ರಮವಾಗಿ ನಡೆಸಲಾಗುತ್ತಿರುವ ಕಸಾಯಿಖಾನೆಯಲ್ಲಿ ಗೋಹತ್ಯೆ ನಡೆಸಿ ಮಾಂಸ ಮಾರಾಟ ಮಾಡಲಾಗುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಗುರುವಾರ ಲಕ್ಷ್ಮೇಶ್ವರದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಯಿತು.

ನೂರಾರು ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಕಸಾಯಿಖಾನೆಯ ಬಳಿ ಜಮಾಯಿಸಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಅಕ್ರಮ ಕಸಾಯಿಖಾನೆಯನ್ನು ಕೂಡಲೇ ಬಂದ್ ಮಾಡಿಸಿ, ಸಂಬಂಧಪಟ್ಟವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದರು.

ಶ್ರೀರಾಮ ಸೇನೆಯ ತಾಲೂಕು ಅಧ್ಯಕ್ಷ ಈರಣ್ಣ ಪೂಜಾರ ನೀಡಿದ ದೂರಿನ ಪ್ರಕಾರ, ಬಲ್ಲ ಮೂಲಗಳ ಮಾಹಿತಿ ಮೇರೆಗೆ ಯುವಕರೊಂದಿಗೆ ಸ್ಥಳಕ್ಕೆ ತೆರಳಿದಾಗ 8ರಿಂದ 10 ಆಕಳುಗಳನ್ನು ಕಡಿಯಲಾಗುತ್ತಿರುವ ದೃಶ್ಯ ಕಂಡು ಬಂದಿದೆ ಎಂದು ಆರೋಪಿಸಲಾಗಿದೆ. ಪ್ರಶ್ನಿಸಲು ಹೋದಾಗ ಕಸಾಯಿಖಾನೆಯಲ್ಲಿದ್ದವರು ಮಾರಕಾಸ್ತ್ರಗಳಿಂದ ಹಲ್ಲೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ.

ಬಳಿಕ ಪೊಲೀಸರೊಂದಿಗೆ ಸ್ಥಳಕ್ಕೆ ತೆರಳಿದ ಯುವಕರು, ಆಕಳು, ಎತ್ತು ಹಾಗೂ ಎಮ್ಮೆಗಳನ್ನು ಕಡಿಯಲಾಗಿರುವ ದೃಶ್ಯಗಳನ್ನು ತೋರಿಸಿ ಆಕ್ರೋಶ ವ್ಯಕ್ತಪಡಿಸಿದರು.

ಮಾತಿನ ಚಕಮಕಿ, ಉದ್ವಿಗ್ನ ವಾತಾವರಣ

ಘಟನಾ ಸ್ಥಳದಲ್ಲಿ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಹಾಗೂ ಕಸಾಯಿಖಾನೆ ಸಿಬ್ಬಂದಿ ನಡುವೆ ಮಾತಿನ ಚಕಮಕಿ ನಡೆಯಿತು. ಪರಿಸ್ಥಿತಿ ಉದ್ವಿಗ್ನಗೊಂಡ ಹಿನ್ನೆಲೆಯಲ್ಲಿ ಪೊಲೀಸರು ಸ್ಥಳದಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಿದರು.

ಈ ವೇಳೆ ಓರ್ವ ಕಸಾಯಿಖಾನೆಯ ಸಿಬ್ಬಂದಿ ಅಂಗಡಿ ಬಂದ್ ಮಾಡಿ ಅಲ್ಲಿಂದ ತೆರಳಿದ್ದಾನೆ ಎಂದು ತಿಳಿದು ಬಂದಿದೆ.

ಬಸವರಾಜ ಚಕ್ರಸಾಲಿ ಮಾತನಾಡಿ, “ಪಟ್ಟಣದಲ್ಲಿ ಹಲವು ವರ್ಷಗಳಿಂದ ಅಕ್ರಮ ಕಸಾಯಿಖಾನೆ, ಗೋ ಸಾಗಾಣಿಕೆ ಹಾಗೂ ಅನಧಿಕೃತ ಮಾಂಸ ಮಾರಾಟ ನಡೆಯುತ್ತಿದ್ದರೂ ಪುರಸಭೆ ಮತ್ತು ಪೊಲೀಸರು ಕಣ್ಮುಚ್ಚಿ ಕುಳಿತಿರುವುದು ಸಾರ್ವಜನಿಕರ ಅನುಮಾನಕ್ಕೆ ಕಾರಣವಾಗಿದೆ” ಎಂದು ಆರೋಪಿಸಿದರು.

ಸ್ಥಳೀಯರ ಪ್ರಕಾರ, ಪುರಸಭೆ ಜಾಗವನ್ನು ಹಲವು ವರ್ಷಗಳಿಂದ ಅಕ್ರಮವಾಗಿ ಬಳಸಲಾಗುತ್ತಿದ್ದು, ಇದರಿಂದ ಪರಿಸರ ಮಾಲಿನ್ಯ ಹಾಗೂ ದುರ್ವಾಸನೆ ಸಮಸ್ಯೆ ಹೆಚ್ಚಾಗಿದೆ ಎಂದು ದೂರಲಾಗಿದೆ.

ಕ್ರಮದ ಭರವಸೆ ನೀಡಿದ ಪೊಲೀಸರು

ಸಿಪಿಐ ಬಿ.ವೈ. ನ್ಯಾಮಗೌಡ ಹಾಗೂ ಪಿಎಸ್‌ಐ ನಾಗರಾಜ ಗಡದ ಸ್ಥಳಕ್ಕೆ ಭೇಟಿ ನೀಡಿ ಪ್ರತಿಭಟನಾಕಾರರನ್ನು ಸಮಾಧಾನಪಡಿಸಿದರು. ಪ್ರಕರಣದ ಕುರಿತು ಪರಿಶೀಲನೆ ನಡೆಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಘಟನೆಯ ಗಂಭೀರತೆ ಅರಿತು ಸ್ಥಳಕ್ಕೆ ಆಗಮಿಸಿದ ಡಿವೈಎಸ್‌ಪಿ ಮುರ್ತುಜಾ ಖಾದ್ರಿ ಸ್ಥಳ ಪರಿಶೀಲನೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಮುತ್ತು ಕರ್ಜೆಕಣ್ಣವರ, ಅಮರೀಶ ಗಾಂಜಿ, ಪ್ರತಾಪ ಅಂಕಲಿ, ಪ್ರಾಣೇಶ ವ್ಯಾಪಾರಿ, ನವೀನ ಹಿರೇಮಠ, ಪ್ರವೀಣ ಬೋಮಲೆ, ವಿಜಯ ಕುಂಬಾರ, ಚಿನ್ನು ಹಾಳದೋಳದ, ವಾಸು ಗೋಸಾವಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

“ಹಿಂದೂಗಳ ಪೂಜ್ಯನೀಯ ಆಕಳುಗಳನ್ನು ಹತ್ಯೆ ಮಾಡುತ್ತಿರುವುದನ್ನು ಸಹಿಸುವ ಪ್ರಶ್ನೆಯೇ ಇಲ್ಲ. ಅಕ್ರಮ ಕಸಾಯಿಖಾನೆ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಉಗ್ರ ಹೋರಾಟ ಅನಿವಾರ್ಯವಾಗಲಿದೆ.”

ಈರಣ್ಣ ಪೂಜಾರ

ತಾಲೂಕು ಅಧ್ಯಕ್ಷ, ಶ್ರೀರಾಮ ಸೇನೆ

ಲಸಿಕೆಗಾಗಿ ತಾಯಂದಿರ ಪರದಾಟ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕ್ಕಮಕ್ಕಳಿಗೆ ನೀಡುವ ಲಸಿಕಾ ಚುಚ್ಚುಮದ್ದು ಪಡೆಯಲು ಬಂದ ತಾಯಂದಿರು ಮತ್ತು ಪಾಲಕರು ಗುರುವಾರ ಗಂಟೆಗಟ್ಟಲೆ ಕಾಯುವಂತಾದ ಘಟನೆ ನಡೆದಿದೆ. ಸಿಬ್ಬಂದಿಯ ನಿರ್ಲಕ್ಷ್ಯ ಹಾಗೂ ಸ್ಪಂದನೆಯ ಕೊರತೆಯಿಂದ ಪಾಲಕರು ಆಕ್ರೋಶ ವ್ಯಕ್ತಪಡಿಸಿದರು.

ಹೆರಿಗೆಯಾದ ಒಂದು ದಿನದ ಮಗುವಿನಿಂದ ಹಿಡಿದು ಐದು ವರ್ಷದೊಳಗಿನ ಮಕ್ಕಳಿಗೆ ನೀಡುವ ಲಸಿಕೆಗಾಗಿ ಸಾಕಷ್ಟು ಸಂಖ್ಯೆಯಲ್ಲಿ ಬಾಣಂತಿಯರು ಹಾಗೂ ತಾಯಂದಿರು ಆಸ್ಪತ್ರೆಗೆ ಆಗಮಿಸಿದ್ದರು. ಆದರೆ ಲಸಿಕೆ ನೀಡುವ ಪ್ರಕ್ರಿಯೆ ವಿಳಂಬವಾಗಿದ್ದರಿಂದ ಹಲವರು ಮಕ್ಕಳೊಂದಿಗೆ ಗಂಟೆಗಳ ಕಾಲ ಕಾಯಬೇಕಾದ ಪರಿಸ್ಥಿತಿ ಎದುರಾಯಿತು ಎಂದು ಪಾಲಕರು ದೂರಿದರು.

ಪಾಲಕರು ಕಾರಣ ಕೇಳಿದಾಗ ಕೆಲ ಸಿಬ್ಬಂದಿ ಉಡಾಫೆಯಾಗಿ ವರ್ತಿಸಿ ಮಾತನಾಡಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ. “ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸಬೇಕಾದ ಸಿಬ್ಬಂದಿ ಬೇಜವಾಬ್ದಾರಿತನ ತೋರಿದ್ದಾರೆ” ಎಂದು ಗಿರೀಶ ಅಗಡಿ ಆರೋಪಿಸಿದರು.

ಗಾಳಿಯಾಡದ ಕೊಠಡಿಯಲ್ಲಿ ನೂರಾರು ತಾಯಂದಿರು ಹಸುಗೂಸುಗಳನ್ನು ತೊಡೆಯ ಮೇಲೆ ಹಾಕಿಕೊಂಡು ತಮ್ಮ ಸರದಿಗಾಗಿ ಕಾಯುತ್ತಾ ಕುಳಿತಿದ್ದರು. ಮಕ್ಕಳಿಗೆ ಎದೆಹಾಲುಣಿಸಲು ಸಹ ಪ್ರತ್ಯೇಕ ವ್ಯವಸ್ಥೆ ಇಲ್ಲದ ಕಾರಣ ಮಹಿಳೆಯರು ಮುಜುಗರ ಅನುಭವಿಸುವಂತಾಯಿತು ಎಂದು ತಾಯಂದಿರು ಅಸಮಾಧಾನ ವ್ಯಕ್ತಪಡಿಸಿದರು.

ಆಸ್ಪತ್ರೆಯಲ್ಲಿ ಬಾಣಂತಿಯರು ಮತ್ತು ಹಸುಗೂಸುಗಳಿಗೆ ಅನುಕೂಲವಾಗುವಂತೆ ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಬೇಕು ಹಾಗೂ ಇಂತಹ ಘಟನೆಗಳು ಮರುಕಳಿಸದಂತೆ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಪಾಲಕರು ಆಗ್ರಹಿಸಿದರು.

80ರ ಹರೆಯದಲ್ಲೂ ಕೈಬಿಡದ ದುಡಿಮೆ!

ವಿಜಯಸಾಕ್ಷಿ ಸುದ್ದಿ, ಗಜೇಂದ್ರಗಡ: ವಯಸ್ಸು 80 ದಾಟಿದರೂ ದುಡಿದು ತಿನ್ನಬೇಕು ಎನ್ನುವ ಛಲ ಮಾತ್ರ ಕುಂದಿಲ್ಲ. ದೇಹದಲ್ಲಿ ಶಕ್ತಿ ಇರುವವರೆಗೆ ಕೆಲಸ ಮಾಡಲೇಬೇಕು ಎನ್ನುವ ಹಠದಿಂದ ವೀರಾಪುರ ಗ್ರಾಮದ ಹನಮವ್ವ ಹನಮಪ್ಪ ಮೊಹಿತೆ ಕಳೆದ 20 ವರ್ಷಗಳಿಂದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಕೂಲಿ ಕೆಲಸ ಮಾಡುತ್ತಿದ್ದಾರೆ.
ಗಜೇಂದ್ರಗಡ ತಾಲೂಕಿನ ರಾಂಪೂರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೀರಾಪುರ ಗ್ರಾಮದ ನಿವಾಸಿಯಾದ ಹನಮವ್ವ ಅವರಿಗೆ ಪತಿ ಇಲ್ಲ. ಇಬ್ಬರು ಗಂಡು ಮಕ್ಕಳು ಇದ್ದರೂ ಕುಟುಂಬದ ಸಂಕಷ್ಟ ಮಾತ್ರ ಕಡಿಮೆಯಾಗಿಲ್ಲ. ಒಬ್ಬ ಮಗ ಬೇರೆ ಮನೆ ಮಾಡಿಕೊಂಡಿದ್ದರೆ, ಮತ್ತೊಬ್ಬ ಮಗ ಎಂಟು ವರ್ಷಗಳ ಹಿಂದೆ ಕೆಲಸಕ್ಕೆ ಹೋದವನು ಮರಳಿ ಮನೆಗೆ ಬಂದಿಲ್ಲ. ಇದೀಗ ಸೊಸೆಯೊಂದಿಗೆ ಜೀವನ ಸಾಗಿಸುತ್ತಿರುವ ಹನಮವ್ವ, ತಮ್ಮ ಎರಡು ಎಕರೆ ಒಣಭೂಮಿಯಿಂದ ಜೀವನ ಸಾಗುವುದು ಕಷ್ಟವೆಂದು ಅರಿತು ನರೇಗಾ ಯೋಜನೆಯ ಮೊರೆ ಹೋಗಿದ್ದಾರೆ.
ಬೇಸಿಗೆ ಸಮಯದಲ್ಲಿ ಗ್ರಾಮದಲ್ಲಿ ಕೆಲಸ ಸಿಗದ ಸಂದರ್ಭಗಳಲ್ಲಿ ನರೇಗಾ ಯೋಜನೆಯೇ ಇವರ ಕುಟುಂಬಕ್ಕೆ
ಆಧಾರವಾಗಿದೆ. ಸೊಸೆಯೊಂದಿಗೆ ಕಾಮಗಾರಿಗೆ ತೆರಳಿ ಇಂದಿಗೂ ಉತ್ಸಾಹದಿಂದ ದುಡಿಯುತ್ತಿರುವ ಹನಮವ್ವ ಗ್ರಾಮದಲ್ಲೇ ಇತರರಿಗೆ ಮಾದರಿಯಾಗಿದ್ದಾರೆ.
ಇನ್ನೊಬ್ಬ ಹಿರಿಯ ಮಹಿಳೆ ಹನಮವ್ವ ಯಲ್ಲಪ್ಪ ಮೊಹಿತೆ ಅವರಿಗೂ 78 ವರ್ಷ ವಯಸ್ಸು. ಆದರೂ ಉದ್ಯೋಗ ಖಾತ್ರಿ ಕೆಲಸ ಆರಂಭವಾದರೆ ಸಾಕು, ನಮೂನೆ-6ರಲ್ಲಿ ಹೆಸರು ನೋಂದಾಯಿಸಿಕೊಂಡು ಕೆಲಸಕ್ಕೆ ಬರುತ್ತಾರೆ.

“ಮನೆಯಲ್ಲಿ ಖಾಲಿ ಕುಳಿತುಕೊಳ್ಳುವುದಕ್ಕಿಂತ ಮಕ್ಕಳಿಗೆ ಸಹಾಯ ಮಾಡಬೇಕು” ಎನ್ನುವ ಮನೋಭಾವದಿಂದ ಅವರು ಮಕ್ಕಳ ಹಾಗೂ ಸೊಸೆಯಂದಿರೊಂದಿಗೆ ನರೇಗಾ ಕಾಮಗಾರಿಯಲ್ಲಿ ದುಡಿಯುತ್ತಿದ್ದಾರೆ.

ಗ್ರಾಮೀಣ ಭಾಗದ ವಯೋವೃದ್ಧರು ಮತ್ತು ವಿಶೇಷಚೇತನರಿಗೆ ಕೆಲಸದ ಪ್ರಮಾಣದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುತ್ತಿರುವುದರಿಂದ ಸಾಕಷ್ಟು ಬಡ ಕೂಲಿಕಾರರಿಗೆ ಯೋಜನೆ ನೆರವಾಗುತ್ತಿದೆ.

“ಬೇಸಿಗೆಯಲ್ಲಿ ಹಳ್ಳಿಯಲ್ಲಿ ಕೆಲಸ ಇರಲ್ಲರೀ… ಉದ್ಯೋಗ ಖಾತ್ರಿ ಕೆಲಸ ಶುರುವಾದರೆ ನಾವು ಕೂಡ ಕೆಲಸಕ್ಕೆ ಬರುತ್ತೀವಿ. ದೇಹದಲ್ಲಿ ಇನ್ನೂ ದುಡಿಯುವ ಶಕ್ತಿ ಇದೆ. ಮನೆಯಲ್ಲಿ ಖಾಲಿ ಕುಳಿತುಕೊಳ್ಳುವುದಕ್ಕಿಂತ ನಾಲ್ಕು ರೂಪಾಯಿ ದುಡಿದರೆ ಬದುಕಿಗೆ ಸಹಾಯವಾಗುತ್ತದೆ.”

 ಹನಮವ್ವ ಮೊಹಿತೆ, ಕೂಲಿಕಾರರು, ವೀರಾಪುರ

“ನರೇಗಾ ಜಾಬ್ ಕಾರ್ಡ್ ಹೊಂದಿರುವ ಪ್ರತಿಯೊಬ್ಬರೂ ಕೆಲಸ ಮಾಡಬಹುದು. ಇದರಲ್ಲಿ ಯಾವುದೇ ವಯಸ್ಸಿನ ಮಿತಿ ಇಲ್ಲ. ವಯೋವೃದ್ಧರು ಹಾಗೂ ವಿಕಲಚೇತನರಿಗೆ ಕೆಲಸದ ಪ್ರಮಾಣದಲ್ಲಿ ರಿಯಾಯಿತಿ ನೀಡಲಾಗುತ್ತಿದೆ.”

ವಿಶ್ವನಾಥ ರಾಠೋಡ,

ಸಹಾಯಕ ನಿರ್ದೇಶಕರು (ಗ್ರಾ.ಉ), ತಾ.ಪಂ. ಗಜೇಂದ್ರಗಡ

“ಬೇಸಿಗೆಯಲ್ಲಿ ಗ್ರಾಮೀಣ ಭಾಗದ ಜನರು ಗುಳೆ ಹೋಗುವುದನ್ನು ತಪ್ಪಿಸಲು ಊರಲ್ಲೇ ಕೆಲಸ ನೀಡಲಾಗುತ್ತಿದೆ. ನರೇಗಾ ಯೋಜನೆ ಗ್ರಾಮೀಣ ಕುಟುಂಬಗಳಿಗೆ ಆರ್ಥಿಕ ಬಲ ನೀಡುತ್ತಿದೆ.”

ಚಂದ್ರಶೇಖರ ಬಿ. ಕಂದಕೂರ, ಇಒ, ತಾ.ಪಂ. ಗಜೇಂದ್ರಗಡ

ನರೇಗಾ ಕೆಲಸದಲ್ಲಿ ನಿರ್ಲಕ್ಷ್ಯ ಬೇಡ

ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ತಾಲೂಕಿನ ಕಡಕೋಳ ಹಾಗೂ ಛಬ್ಬಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಪ್ರಗತಿಯಲ್ಲಿರುವ ನರೇಗಾ ಹಾಗೂ ವಿವಿಧ ಸಮುದಾಯ ಕಾಮಗಾರಿಗಳ ಪರಿಶೀಲನೆಯನ್ನು ಶಿರಹಟ್ಟಿ ತಾಲೂಕ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಆರ್.ವಿ. ದೊಡ್ಡಮನಿ ಬುಧವಾರ ನಡೆಸಿ, ಕಾಮಗಾರಿಗಳ ಗುಣಮಟ್ಟ ಹಾಗೂ ಕೂಲಿ ಕಾರ್ಮಿಕರ ಹಾಜರಾತಿ ವ್ಯವಸ್ಥೆ ಕುರಿತು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಕಾಮಗಾರಿಗಳ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ಸ್ಥಳದಲ್ಲಿದ್ದ ನರೇಗಾ ಕೂಲಿಕಾರ್ಮಿಕರೊಂದಿಗೆ ಚರ್ಚಿಸಿ ಕೆಲಸದ ಪ್ರಮಾಣ, ಕೂಲಿ ಪಾವತಿ ಹಾಗೂ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸಿದರು.

ನಂತರ ಮಾತನಾಡಿದ ತಾಪಂ ಇಒ ಆರ್.ವಿ. ದೊಡ್ಡಮನಿ, “ಗ್ರಾಮ ಪಂಚಾಯತ್ ವತಿಯಿಂದ ನಡೆಯುತ್ತಿರುವ ಸಮುದಾಯದ ಕಾಮಗಾರಿಗಳ ಪರಿಶೀಲನೆ ನಡೆಸಲಾಗುತ್ತಿದೆ. ಪ್ರತಿ ಕೂಲಿ ಕಾರ್ಮಿಕರು ಅಳತೆಗೆ ಅನುಗುಣವಾಗಿ ಕೆಲಸ ನಿರ್ವಹಿಸಿದರೆ 370 ರೂ.ಗಳ ಕೂಲಿ ದೊರೆಯುತ್ತದೆ. ಹಿರಿಯ ನಾಗರಿಕರು, ಗರ್ಭಿಣಿಯರು ಹಾಗೂ ಅಂಗವಿಕಲರಿಗೆ ಕೆಲಸದ ಪ್ರಮಾಣದಲ್ಲಿ ರಿಯಾಯಿತಿ ನೀಡಲಾಗುತ್ತದೆ” ಎಂದು ತಿಳಿಸಿದರು.

“ಎಲ್ಲ ಕೂಲಿ ಕಾರ್ಮಿಕರು ನಿಯಮಾನುಸಾರ ಕೆಲಸ ನಿರ್ವಹಿಸಿ ದಿನಕ್ಕೆ ಎರಡು ಬಾರಿ ಹಾಜರಾತಿ ಹಾಕಬೇಕು. ಎರಡು ಬಾರಿ ಹಾಜರಾತಿ ಹಾಕದಿದ್ದರೆ ಕೂಲಿ ಹಣ ಪಾವತಿಯಾಗುವುದಿಲ್ಲ. ಆದ್ದರಿಂದ ಎಲ್ಲರೂ ಜವಾಬ್ದಾರಿಯಿಂದ ಕೆಲಸ ನಿರ್ವಹಿಸಬೇಕು” ಎಂದು ಖಡಕ್ ಸೂಚನೆ ನೀಡಿದರು.

“ಬೇಸಿಗೆ ಹಿನ್ನೆಲೆ ಆರೋಗ್ಯದ ಕಡೆಗೂ ಹೆಚ್ಚಿನ ಗಮನಹರಿಸಬೇಕು. ಬೆಳಗಿನ ಜಾವವೇ ಕೆಲಸಕ್ಕೆ ಆಗಮಿಸಿ ಕೆಲಸದಲ್ಲಿ ತೊಡಗಬೇಕು. ಬಂದಂತಹ ಕೂಲಿ ಹಣವನ್ನು ಕೃಷಿ ಚಟುವಟಿಕೆಗಳು ಹಾಗೂ ಮಕ್ಕಳ ಶಿಕ್ಷಣದ ಅಗತ್ಯತೆಗಳಿಗೆ ಸದ್ಬಳಕೆ ಮಾಡಿಕೊಳ್ಳಬೇಕು” ಎಂದು ಸಲಹೆ ನೀಡಿದರು.

ಪರಿಶೀಲನಾ ವೇಳೆ ಕಡಕೋಳ ಗ್ರಾಮ ಪಂಚಾಯತ್ ಪಿಡಿಓ ಶಿವಾನಂದ ಮಾಳವಾಡ, ಛಬ್ಬಿ ಗ್ರಾಮ ಪಂಚಾಯತ್ ಪಿಡಿಓ ಸುಜಾತಾ ಕಪ್ಪಲಿ, ಟಿಐಇಸಿ ವಿರೇಶ ಪಟ್ಟಣಶೆಟ್ಟಿ, ತಾಂತ್ರಿಕ ಸಹಾಯಕ ಆಂಜನೇಯ, ಲಿಂಗರಾಜ, ಬಿಎಫ್‌ಟಿ, ಡಿಇಓ, ಕಾಯಕ ಬಂಧುಗಳು, ಗ್ರಾಮ ಪಂಚಾಯತ್ ಸಿಬ್ಬಂದಿ ಹಾಗೂ ನರೇಗಾ ಕೂಲಿಕಾರ್ಮಿಕರು ಉಪಸ್ಥಿತರಿದ್ದರು.

ಗಾಳಿ-ಮಳೆಗೆ ನೆಲಕಚ್ಚಿದ ಮಾವಿನ ಬೆಳೆ..!

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಪಟ್ಟಣ ಸೇರಿದಂತೆ ತಾಲೂಕಿನ ವಿವಿಧ ಭಾಗಗಳಲ್ಲಿ ಇತ್ತೀಚೆಗೆ ಸುರಿದ ಗಾಳಿ-ಮಳೆಗೆ ತೋಟಗಾರಿಕೆ ಬೆಳೆಗಳು ಭಾರೀ ಹಾನಿಗೀಡಾಗಿದ್ದು, ಮಾವು, ಬಾಳೆ ಸೇರಿದಂತೆ ಹಲವು ಬೆಳೆಗಳ ನಷ್ಟವನ್ನು ಹಿರಿಯ ತೋಟಗಾರಿಕಾ ಇಲಾಖೆ ನಿರ್ದೇಶಕ ಪ್ರಶಾಂತ ಕುಲಕರ್ಣಿ ಅವರು ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲಿಸಿದರು.

ಲಕ್ಷ್ಮೇಶ್ವರದ ಮಾವು ಬೆಳೆಗಾರ ನಿಂಗಪ್ಪ ಪೂಜಾರ ಹಾಗೂ ಸಹೋದರರ ಮಾವಿನ ತೋಟಕ್ಕೆ ಭೇಟಿ ನೀಡಿದ ವೇಳೆ, ಫಲಭರಿತ ಗಿಡಗಳಲ್ಲಿದ್ದ ಮಾವಿನ ಹಣ್ಣುಗಳು ಗಾಳಿಯ ಅಬ್ಬರಕ್ಕೆ ನೆಲಕ್ಕುರುಳಿದ ದೃಶ್ಯ ಕಂಡು ಅಧಿಕಾರಿಗಳು ಪರಿಶೀಲನೆ ನಡೆಸಿದರು. ಕಂದಾಯ ಇಲಾಖೆಯ ಸಿಬ್ಬಂದಿಯೂ ಸ್ಥಳದಲ್ಲೇ ಹಾನಿಯ ಪ್ರಮಾಣದ ಮಾಹಿತಿ ಸಂಗ್ರಹಿಸಿದರು.

ಈ ವೇಳೆ ತಮ್ಮ ಅಳಲನ್ನು ತೋಡಿಕೊಂಡ ರೈತ ನಿಂಗಪ್ಪ ಪೂಜಾರ, “ಈ ವರ್ಷದ ತೀವ್ರ ಬಿಸಿಲಿನ ನಡುವೆಯೂ ಅತ್ಯಂತ ಕಾಳಜಿಯಿಂದ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಮಾವಿನ ತೋಟ ಬೆಳೆಸಿದ್ದೇವೆ. ಆದರೆ ಗಾಳಿ-ಮಳೆಗೆ ಗಿಡದಲ್ಲಿದ್ದ ಫಸಲೆಲ್ಲ ನೆಲಕ್ಕುರುಳಿದೆ. ಮೊದಲೇ ಉತ್ತಮ ಗುಣಮಟ್ಟದ ಹಣ್ಣಿನ ದರ ಕುಸಿದಿದ್ದು, ಈಗ ನೆಲಕ್ಕೆ ಬಿದ್ದ ಹಣ್ಣನ್ನು ಕೇಳುವವರೇ ಇಲ್ಲ. ಬದುಕಿಗೆ ಆಸರೆಯಾಗಿದ್ದ ಬೆಳೆಯೇ ಹಾಳಾಗಿದ್ದು ದಿಕ್ಕು ತೋಚದಂತಾಗಿದೆ” ಎಂದು ಕಣ್ಣೀರಿಟ್ಟರು.

ಪರಿಶೀಲನೆ ಬಳಿಕ ಮಾತನಾಡಿದ ಹಿರಿಯ ತೋಟಗಾರಿಕಾ ಇಲಾಖೆ ನಿರ್ದೇಶಕ ಪ್ರಶಾಂತ ಕುಲಕರ್ಣಿ, “ಲಕ್ಷ್ಮೇಶ್ವರ ಸೇರಿದಂತೆ ತಾಲೂಕಿನ ಕೆಲ ಗ್ರಾಮೀಣ ಭಾಗಗಳಲ್ಲಿ ತೋಟಗಾರಿಕೆ ಬೆಳೆಗಳು ಗಾಳಿ-ಮಳೆಯಿಂದ ಹಾನಿಗೀಡಾಗಿರುವ ಮಾಹಿತಿ ಹಿನ್ನೆಲೆ ಸ್ಥಳ ಪರಿಶೀಲನೆ ನಡೆಸಲಾಗಿದೆ. ಕಂದಾಯ ಹಾಗೂ ತೋಟಗಾರಿಕಾ ಇಲಾಖೆಯಿಂದ ಹಾನಿಯ ಪ್ರಮಾಣ ಆಧರಿಸಿ ಸರ್ಕಾರಕ್ಕೆ ವರದಿ ಸಲ್ಲಿಸಿ ಪರಿಹಾರ ಒದಗಿಸುವ ಪ್ರಕ್ರಿಯೆ ಕೈಗೊಳ್ಳಲಾಗುತ್ತದೆ” ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಸಹಾಯಕ ತೋಟಗಾರಿಕಾ ಅಧಿಕಾರಿ ಶಂಭುಲಿಂಗಪ್ಪ ನೆಗಳೂರು, ಕಂದಾಯ ಇಲಾಖೆಯ ಸಿಬ್ಬಂದಿ ಶ್ರೀಕಾಂತ ನವಲೆ ಉಪಸ್ಥಿತರಿದ್ದರು.

“ಬೆಳೆ ಹಾನಿಗೆ ತಕ್ಷಣ ಪರಿಹಾರ ನೀಡುವ ಮೂಲಕ ರೈತರ ಬದುಕಿಗೆ ಸರ್ಕಾರ ಆಸರೆಯಾಗಬೇಕು”

ನಿಂಗಪ್ಪ ಪೂಜಾರ ಹಾಗೂ ಸಹೋದರರು ನೀಲಪ್ಪ, ನಾಗಪ್ಪ, ಶಿವಪ್ಪ, ದೇವಪ್ಪ

ಗದಗ ಪೊಲೀಸರ ಸ್ಮಾರ್ಟ್ ಆಪರೇಷನ್..!

ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ/ಗದಗ: ಅಪರಾಧ ಪತ್ತೆ, ಸಾರ್ವಜನಿಕ ಸುರಕ್ಷತೆ ಹಾಗೂ ತ್ವರಿತ ಸೇವೆ ಒದಗಿಸುವ ನಿಟ್ಟಿನಲ್ಲಿ ಗದಗ ಜಿಲ್ಲಾ ಪೊಲೀಸ್ ಇಲಾಖೆ ಕೈಗೊಂಡಿರುವ ಕ್ರಮಗಳು ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆಗೆ ಪಾತ್ರವಾಗುತ್ತಿವೆ. ಕಳ್ಳತನ ಪ್ರಕರಣಗಳ ಪತ್ತೆಯಿಂದ ಹಿಡಿದು ಕಳುವಾದ ಚಿನ್ನಾಭರಣ, ಮೊಬೈಲ್ ಸೇರಿದಂತೆ ವಿವಿಧ ವಸ್ತುಗಳನ್ನು ಮಾಲೀಕರಿಗೆ ಹಿಂತಿರುಗಿಸುವ ಕಾರ್ಯವರೆಗೆ ಹಲವು ಯಶಸ್ವಿ ಕಾರ್ಯಾಚರಣೆಗಳನ್ನು ನಡೆಸುತ್ತಿರುವ ಪೊಲೀಸರು, ಇದೀಗ ಸಾಮಾಜಿಕ ಜಾಲತಾಣಗಳ ಮೂಲಕ ಜನರಲ್ಲಿ ಅರಿವು ಮೂಡಿಸುವ ಕಾರ್ಯಕ್ಕೂ ಹೆಚ್ಚಿನ ಒತ್ತು ನೀಡುತ್ತಿದ್ದಾರೆ.

ಜಿಲ್ಲೆಯಾದ್ಯಂತ ಸಿ.ಸಿ. ಕ್ಯಾಮೆರಾ ಕಣ್ಗಾವಲು

ಅಪರಾಧ ಪ್ರಕರಣಗಳನ್ನು ತ್ವರಿತಗತಿಯಲ್ಲಿ ಪತ್ತೆಹಚ್ಚುವ ಉದ್ದೇಶದಿಂದ ಗದಗ ಜಿಲ್ಲಾ ಪೊಲೀಸ್ ಇಲಾಖೆ ಜಿಲ್ಲೆಯಾದ್ಯಂತ ನೂರಾರು ಸಿ.ಸಿ. ಕ್ಯಾಮೆರಾಗಳನ್ನು ಅಳವಡಿಸಿದೆ. ಪ್ರಮುಖ ರಸ್ತೆ, ವಾಣಿಜ್ಯ ಕೇಂದ್ರ ಹಾಗೂ ಸೂಕ್ಷ್ಮ ಪ್ರದೇಶಗಳಲ್ಲಿ ಕ್ಯಾಮೆರಾ ಕಣ್ಗಾವಲು ಹೆಚ್ಚಿಸಲಾಗಿದ್ದು, ಅಪರಾಧಿಗಳ ಚಲನವಲನಗಳ ಮೇಲೆ ನಿರಂತರ ನಿಗಾ ಇಡಲಾಗಿದೆ.

ಇದರ ಜೊತೆಗೆ ಸೂಕ್ಷ್ಮ ಪ್ರಕರಣಗಳಲ್ಲಿ ಹಾಗೂ ಬಾಂಬ್ ನಿಷ್ಕ್ರಿಯಗೊಳಿಸುವ ಕಾರ್ಯಾಚರಣೆಗಳಲ್ಲಿ ಡಾಗ್ ಸ್ಕ್ವಾಡ್ ಸೇವೆಯನ್ನೂ ಪರಿಣಾಮಕಾರಿಯಾಗಿ ಬಳಸಿಕೊಳ್ಳಲಾಗುತ್ತಿದೆ. ಈ ಕ್ರಮದಿಂದ ಹಲವು ಕಳ್ಳತನ ಪ್ರಕರಣಗಳನ್ನು ಭೇದಿಸುವಲ್ಲಿ ಇಲಾಖೆ ಯಶಸ್ಸು ಸಾಧಿಸಿದೆ.

ಅಪರಾಧ ಚಟುವಟಿಕೆಗಳಿಗೆ ಪೊಲೀಸರ ಬ್ರೇಕ್

ಅಪರಾಧ ಪ್ರಕರಣಗಳನ್ನು ಪತ್ತೆ ಹಚ್ಚುವುದರ ಜೊತೆಗೆ ಅಪರಾಧ ಚಟುವಟಿಕೆಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ತನ್ನ ಕಾರ್ಯವೈಖರಿಯಲ್ಲಿ ಹಲವು ಬದಲಾವಣೆಗಳನ್ನು ಮಾಡಿಕೊಂಡಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ ನೇತೃತ್ವದಲ್ಲಿ ಸಾರ್ವಜನಿಕರಿಗೆ ಉತ್ತಮ ಸೇವೆ ನೀಡಲು ಹಲವು ಕ್ರಮಗಳನ್ನು ಜಾರಿಗೆ ತರಲಾಗುತ್ತಿದೆ.

ಪ್ರತಿ ತಾಲೂಕು ಕೇಂದ್ರಗಳಿಗೆ ಭೇಟಿ ನೀಡುತ್ತಿರುವ ಅಧಿಕಾರಿಗಳು, ಪೊಲೀಸ್ ಠಾಣೆಗಳ ಪರಿಶೀಲನೆ ನಡೆಸಿ ಸಿಬ್ಬಂದಿಯ ಅಹವಾಲು ಆಲಿಸುವುದು, ಬಾಕಿ ಪ್ರಕರಣಗಳ ಮಾಹಿತಿ ಪರಿಶೀಲಿಸುವುದು ಹಾಗೂ ಕಾನೂನು ಸುವ್ಯವಸ್ಥೆ ಕುರಿತು ನಿಗಾ ವಹಿಸುವ ಕಾರ್ಯ ಮಾಡುತ್ತಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಜಾಗೃತಿ ಅಭಿಯಾನ

ಗದಗ ಜಿಲ್ಲಾ ಪೊಲೀಸ್ ಇಲಾಖೆ ಪ್ರತಿಯೊಂದು ಠಾಣಾ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಕಾರ್ಯಾಚರಣೆ, ಅಪರಾಧ ಪತ್ತೆ, ಕಳ್ಳತನ ಪ್ರಕರಣಗಳ ಭೇದನೆ ಹಾಗೂ ಸಾರ್ವಜನಿಕರಿಗೆ ನೀಡುತ್ತಿರುವ ಸೇವೆಗಳ ಕುರಿತು ಸಾಮಾಜಿಕ ಜಾಲತಾಣಗಳ ಮೂಲಕ ನಿರಂತರ ಮಾಹಿತಿ ಹಂಚಿಕೊಳ್ಳುತ್ತಿದೆ.

ಪೊಲೀಸರ ಕಾರ್ಯಚಟುವಟಿಕೆಗಳ ವಿಡಿಯೋ, ಫೋಟೋ ಹಾಗೂ ಮಾಹಿತಿ ಸಾರ್ವಜನಿಕರಿಗೆ ತಲುಪುತ್ತಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳ ಕಾರ್ಯದಕ್ಷತೆಗೆ ಜಿಲ್ಲೆಯಾದ್ಯಂತ ಮೆಚ್ಚುಗೆ ವ್ಯಕ್ತವಾಗುತ್ತಿದೆ.

“ಜಿಲ್ಲೆಯಾದ್ಯಂತ ಅಪರಾಧ ಪತ್ತೆ ಹಾಗೂ ಸಾರ್ವಜನಿಕರ ಸುರಕ್ಷತೆಗೆ ಮೊದಲ ಆದ್ಯತೆ ನೀಡಲಾಗಿದೆ. ಆಯ್ದ ಸ್ಥಳಗಳಲ್ಲಿ ಸಿ.ಸಿ. ಕ್ಯಾಮರಾಗಳನ್ನು ಅಳವಡಿಸಿ ಅಪರಾಧ ಪ್ರಕರಣಗಳ ಸಂಖ್ಯೆ ಕಡಿಮೆಗೊಳಿಸಲು ಕ್ರಮ ಕೈಗೊಳ್ಳಲಾಗಿದೆ. ಜಿಲ್ಲೆಯ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಜೊತೆಗೆ ಸಾಮಾಜಿಕ ಜಾಲತಾಣಗಳ ಮೂಲಕ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಗುತ್ತಿದೆ.”

ರೋಹನ್ ಜಗದೀಶ

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಗದಗ

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾಗಿ ಎಸ್.ಆರ್. ಬಂಡಿ ಅವಿರೋಧ ಆಯ್ಕೆ

ವಿಜಯಸಾಕ್ಷಿ ಸುದ್ದಿ, ಗದಗ: ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ (ರಿ) ಬೆಂಗಳೂರು, ಗದಗ ಗ್ರಾಮೀಣ ಘಟಕದ 2026-2031ನೇ ಅವಧಿಗೆ ನೂತನ ಪದಾಧಿಕಾರಿಗಳ ಆಯ್ಕೆಗಾಗಿ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಎಸ್.ಆರ್. ಬಂಡಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಪ್ರಧಾನ ಕಾರ್ಯದರ್ಶಿಯಾಗಿ ಎನ್.ಎಚ್. ಪಾಟೀಲ, ಕೋಶಾಧ್ಯಕ್ಷರಾಗಿ ಎಸ್.ಎಸ್. ಲಕ್ಷಕೊಪ್ಪ, ಉಪಾಧ್ಯಕ್ಷರಾಗಿ ಎಸ್.ಪಿ. ಕುರಿ ಹಾಗೂ ಶ್ರೀಮತಿ ಎಸ್.ಡಿ. ಗುಂಜಳ ಆಯ್ಕೆಯಾಗಿದ್ದಾರೆ.

ಸಹ ಕಾರ್ಯದರ್ಶಿಗಳಾಗಿ ಎಸ್.ಎಂ. ಉಜ್ಜಣ್ಣವರ ಮತ್ತು ಶ್ರೀಮತಿ ಎನ್.ಆರ್. ಶೈಲಾ, ಸಂಘಟನಾ ಕಾರ್ಯದರ್ಶಿಗಳಾಗಿ ಬಿ.ವಾಯ್. ಹುಡೇದಮನಿ ಹಾಗೂ ಶ್ರೀಮತಿ ಎಸ್.ಎನ್. ಅನ್ಸಾರಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಗದಗ ಗ್ರಾಮೀಣ ಘಟಕದ ಮುಖ್ಯ ಚುನಾವಣಾಧಿಕಾರಿ ವ್ಹಿ.ಎಂ. ಪಾಟೀಲ ತಿಳಿಸಿದ್ದಾರೆ.

ಅವಿರೋಧವಾಗಿ ಆಯ್ಕೆಯಾದ ಎಲ್ಲ ಪದಾಧಿಕಾರಿಗಳಿಗೆ ಗದಗ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರು ಅಭಿನಂದನೆ ಸಲ್ಲಿಸಿದ್ದು, ಇವರ ಅಧಿಕಾರದ ಅವಧಿಯಲ್ಲಿ ಸಂಘದ ಅಭಿವೃದ್ಧಿಗೆ ಉತ್ತಮ ಕಾರ್ಯಗಳು ನಡೆಯಲಿ ಎಂದು ಶುಭ ಹಾರೈಸಿದ್ದಾರೆ.

ಬೆಂಗಳೂರಿನಲ್ಲಿ ‘ಮಲ್ಟಿ-ಟಾರ್ಗೆಟ್’ ಕಳ್ಳ ಬಂಧನ: 25 ಬೈಕ್ ಸೇರಿ ಗ್ಯಾಸ್ ಸಿಲಿಂಡರ್, ಬ್ಯಾಟರಿ ಜಪ್ತಿ!

ಬೆಂಗಳೂರು: ಒಬ್ಬನೇ ಕಳ್ಳ, ಆದರೆ ಕಳ್ಳತನದ ವಿಧಾನ ಮಾತ್ರ ವಿಭಿನ್ನ. ಬೈಕ್‌ಗಳಿಂದ ಹಿಡಿದು ಗ್ಯಾಸ್ ಸಿಲಿಂಡರ್, ವಾಹನ ಬ್ಯಾಟರಿವರೆಗೆ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಬೆಂಗಳೂರಿನ ಕೆಂಗೇರಿ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಅಭಿಷೇಕ್ ಎಂದು ಗುರುತಿಸಲಾಗಿದ್ದು, ಆತನಿಂದ 25 ಬೈಕ್‌ಗಳನ್ನು ವಶಕ್ಕೆ ಪಡೆಯಲಾಗಿದೆ.

ಆರಂಭದಲ್ಲಿ ಬೈಕ್ ಕಳ್ಳತನ ಪ್ರಕರಣದ ಆಧಾರದ ಮೇಲೆ ಬಂಧನಕ್ಕೆ ಒಳಗಾದ ಅಭಿಷೇಕ್‌ನನ್ನು ವಿಚಾರಣೆ ನಡೆಸಿದಾಗ, ಆತ ಹಲವು ಕಳ್ಳತನಗಳಲ್ಲಿ ತೊಡಗಿದ್ದದ್ದು ಬೆಳಕಿಗೆ ಬಂದಿದೆ. ಬೈಕ್‌ಗಳಿಗೆ ನಕಲಿ ದಾಖಲೆಗಳನ್ನು ಸೃಷ್ಟಿಸಿ, ಬಳಿಕ ಅವುಗಳನ್ನು OLX ಹಾಗೂ ಫೇಸ್‌ಬುಕ್ ಸೇರಿದಂತೆ ಸಾಮಾಜಿಕ ಜಾಲತಾಣಗಳ ಮೂಲಕ ಮಾರಾಟ ಮಾಡುತ್ತಿದ್ದ ಎಂದು ತನಿಖೆಯಲ್ಲಿ ಬಹಿರಂಗವಾಗಿದೆ.

ಇದಲ್ಲದೆ, ಗೃಹ ಬಳಕೆಯ ಗ್ಯಾಸ್ ಸಿಲಿಂಡರ್‌ಗಳನ್ನೂ ಕಳ್ಳತನ ಮಾಡುತ್ತಿದ್ದ ಆರೋಪವೂ ಇದ್ದು, ಈ ಸಂಬಂಧ 12 ಸಿಲಿಂಡರ್‌ಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ವಾಹನಗಳ ಬ್ಯಾಟರಿಗಳನ್ನು ಸಹ ಕಳ್ಳತನ ಮಾಡುತ್ತಿದ್ದನೆಂಬ ಮಾಹಿತಿ ಆಧರಿಸಿ ಒಂದು ದೊಡ್ಡ ವಾಹನದ ಬ್ಯಾಟರಿಯನ್ನೂ ವಶಪಡಿಸಿಕೊಂಡಿದ್ದಾರೆ.

ಅಲ್ಲದೇ, ಆಟೋ ರಿಕ್ಷಾ ಕಳ್ಳತನಕ್ಕೂ ಈತನ ಸಂಪರ್ಕ ಇರುವ ಬಗ್ಗೆ ಮಾಹಿತಿ ಲಭ್ಯವಾಗಿದ್ದು, ಒಂದು ಆಟೋವನ್ನು ಸಹ ಪೊಲೀಸರು ಜಪ್ತಿ ಮಾಡಿದ್ದಾರೆ.

ಸದ್ಯ ಆರೋಪಿಯನ್ನು ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಗೃಹಲಕ್ಷ್ಮಿ ಬಾಕಿ ಹಣ ಬಿಡುಗಡೆಗೆ PIL: ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದ ಹೈಕೋರ್ಟ್!

ಬೆಂಗಳೂರು: ರಾಜ್ಯ ಸರ್ಕಾರದ ಗೃಹಲಕ್ಷ್ಮಿ ಯೋಜನೆಯ ಎರಡು ತಿಂಗಳ ಬಾಕಿ ಹಣ ಬಿಡುಗಡೆಗೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಸಂಬಂಧಿಸಿ ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.

ಈ ಕುರಿತು ಬೆಂಗಳೂರಿನ ಕಮಲಾನಗರದ ನಿವಾಸಿ ಆರ್. ಗಂಗಾ ಹಾಗೂ ನಂದಿನಿ ಲೇಔಟ್‌ನ ಜಿ.ಡಿ. ಪವಿತ್ರಾ ಅವರು ಸಲ್ಲಿಸಿದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ನ್ಯಾಯಮೂರ್ತಿಗಳಾದ ಡಾ. ಕೆ. ಮನ್ಮಥ ರಾವ್ ಮತ್ತು ಸೂರಜ್ ಗೋವಿಂದರಾಜ್ ಅವರಿದ್ದ ಪೀಠವು ರಾಜ್ಯ ಹಣಕಾಸು ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ತುರ್ತು ನೋಟಿಸ್ ಜಾರಿ ಮಾಡಿದ್ದು, ಸರ್ಕಾರದ ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿ ವಿಚಾರಣೆಯನ್ನು ಮುಂದೂಡಿದೆ.

ಅರ್ಜಿದಾರರ ಪರವಾಗಿ ಹಿರಿಯ ವಕೀಲ ವಿಕ್ರಮ್ ಹುಯಿಲಗೋಳ ವಾದ ಮಂಡಿಸಿದ್ದಾರೆ.

ವರದಿಗಳ ಪ್ರಕಾರ, 2024ರ ಏಪ್ರಿಲ್‌ನಿಂದ 2025ರ ಜನವರಿವರೆಗೆ ನಿರಂತರವಾಗಿ ಹಣ ವಿತರಣೆ ನಡೆದಿದ್ದ ಗೃಹಲಕ್ಷ್ಮಿ ಯೋಜನೆ, ನಂತರದ ತಿಂಗಳಲ್ಲಿ ತಾಂತ್ರಿಕ ಹಾಗೂ ಆಡಳಿತಾತ್ಮಕ ಬದಲಾವಣೆಗಳಿಂದ ವ್ಯತ್ಯಯಗೊಂಡಿದೆ. ಇದರ ಪರಿಣಾಮವಾಗಿ ಫೆಬ್ರವರಿ ಮತ್ತು ಮಾರ್ಚ್ ತಿಂಗಳ ಕಂತುಗಳು ಫಲಾನುಭವಿಗಳಿಗೆ ಜಮೆಯಾಗದೆ ಬಾಕಿ ಉಳಿದಿವೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.

 

ಭಾರೀ ಗಾಳಿ-ಮಳೆಗೆ ಬೆಂಗಳೂರು ಮೆಟ್ರೋ ಸಂಚಾರ ವಿಳಂಬ: ಪ್ರಯಾಣಿಕರಿಗೆ ತೊಂದರೆ!

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಸುರಿಯುತ್ತಿರುವ ಭಾರಿ ಗಾಳಿ ಹಾಗೂ ಗುಡುಗು ಸಹಿತ ಜಡಿಮಳೆಯಿಂದಾಗಿ ನಮ್ಮ ಮೆಟ್ರೋ ಸಂಚಾರ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ.

ಹಸಿರು ಹಾಗೂ ನೇರಳೆ ಸೇರಿದಂತೆ ಎಲ್ಲಾ ಪ್ರಮುಖ ಮೆಟ್ರೋ ಮಾರ್ಗಗಳಲ್ಲಿ ರೈಲು ಸೇವೆಗಳು ವಿಳಂಬವಾಗಿ ಕಾರ್ಯನಿರ್ವಹಿಸುತ್ತಿವೆ. ಈ ಬಗ್ಗೆ ತುರ್ತು ಪ್ರಕಟಣೆ ಹೊರಡಿಸಿರುವ ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್, ಭಾರೀ ಗಾಳಿ ಮತ್ತು ಮಳೆಯ ಪರಿಣಾಮವಾಗಿ ಮೆಟ್ರೋ ಸೇವೆಗಳ ವೇಳಾಪಟ್ಟಿಯಲ್ಲಿ ವ್ಯತ್ಯಯ ಉಂಟಾಗಿದೆ ಎಂದು ತಿಳಿಸಿದೆ.

ಪ್ರಯಾಣಿಕರ ಸುರಕ್ಷತೆಯೇ ಮೊದಲ ಆದ್ಯತೆ ಎಂದು ಸ್ಪಷ್ಟಪಡಿಸಿರುವ BMRCL, ಈ ಅನಾನುಕೂಲತೆಗೆ ವಿಷಾದ ವ್ಯಕ್ತಪಡಿಸಿದೆ. ಸುರಕ್ಷಿತ ಕಾರ್ಯಾಚರಣೆಗೆ ಆದ್ಯತೆ ನೀಡಲಾಗುತ್ತಿರುವ ಹಿನ್ನೆಲೆಯಲ್ಲಿ ರೈಲುಗಳ ಸಂಚಾರದಲ್ಲಿ ತಾತ್ಕಾಲಿಕ ವಿಳಂಬವಾಗಿದೆ. ಪರಿಸ್ಥಿತಿ ಸಹಜವಾಗುವವರೆಗೆ ಪ್ರಯಾಣಿಕರು ಸಿಬ್ಬಂದಿಗಳೊಂದಿಗೆ ಸಹಕರಿಸಬೇಕಾಗಿ ಮನವಿ ಮಾಡಲಾಗಿದೆ.

error: Content is protected !!