Home Blog

5 ಗ್ರಾಂ ಚಿನ್ನ ಚರಂಡಿಗೆ ಎಸೆದಿದ್ದ ದಂಪತಿ! ಪೊಲೀಸರ ಸಮಯಪ್ರಜ್ಞೆಯಿಂದ ಆಭರಣಗಳು ವಾಪಸ್

0

ವಿಶಾಖಪಟ್ಟಣಂ: ಪೂಜೆ ಮುಗಿದ ನಂತರ ಕಸದ ಜೊತೆಗೆ ತಿಳಿಯದೇ ಚರಂಡಿಗೆ ಎಸೆದಿದ್ದ ಸುಮಾರು 5 ಗ್ರಾಂ ಚಿನ್ನದ ಆಭರಣಗಳು ಪೊಲೀಸರ ಸಕಾಲಿಕ ಕಾರ್ಯಾಚರಣೆಯಿಂದಾಗಿ ಮರಳಿ ಸಿಕ್ಕಿರುವ ರೋಚಕ ಘಟನೆ ವಿಶಾಖಪಟ್ಟಣಂನ ಶ್ರೀನಗರದಲ್ಲಿ ನಡೆದಿದೆ.

ಗಾಜುವಾಕ ಶ್ರೀನಗರದ ನಿವಾಸಿಗಳಾದ ಉಡುಮುಲ ರಮೇಶ್ ಹಾಗೂ ದಿವ್ಯಾ ದಂಪತಿ ಈ ತಿಂಗಳ 21ರಂದು ಶುಕ್ರವಾರ ವರಮಹಾಲಕ್ಷ್ಮಿ ವ್ರತದ ಅಂಗವಾಗಿ ದೇವಿಗೆ ಸುಮಾರು 8 ತೊಲ ಚಿನ್ನದ ಆಭರಣಗಳಿಂದ ಅಲಂಕಾರ ಮಾಡಿದ್ದರು. ಮೂರು ದಿನಗಳ ನಂತರ ರಮೇಶ್ ದೇವಿಯ ಮೇಲಿದ್ದ 3 ತೊಲದ ಹಾರ ಮತ್ತು ಕಾಸನ್ನು ಮಾತ್ರ ತೆಗೆದುಕೊಂಡಿದ್ದು, ಹೂವುಗಳ ನಡುವೆ ಇದ್ದ 1 ಬ್ರೇಸ್‌ಲೆಟ್, 2 ಚೈನ್‌ಗಳು ಹಾಗೂ 3 ಉಂಗುರಗಳು ಸೇರಿದಂತೆ ಉಳಿದ 5 ತೊಲ ಚಿನ್ನದ ಆಭರಣಗಳನ್ನು ಗಮನಿಸದೇ ಪೂಜೆಗೆ ಬಳಸಿದ್ದ ಹೂವು-ಸಾಮಗ್ರಿಗಳ ಜೊತೆಗೆ ಡ್ರೈನೇಜ್‌ಗೆ ಎಸೆದು ಮನೆಗೆ ಮರಳಿದ್ದರು.

ಮನೆಗೆ ಬಂದ ನಂತರ ಚಿನ್ನದ ಆಭರಣಗಳು ಇಲ್ಲದಿರುವುದನ್ನು ಗಮನಿಸಿದ ದಿವ್ಯಾ, ಪತಿಗೆ ತಿಳಿಸಿದ್ದರು. ತಕ್ಷಣವೇ ಕಾಲುವೆ ಬಳಿ ಹೋಗಿ ಹುಡುಕಿದರೂ ಚಿನ್ನ ಸಿಗದ ಕಾರಣ ತೀವ್ರ ಆತಂಕಗೊಂಡ ದಂಪತಿ ಸ್ಟೀಲ್ ಪ್ಲಾಂಟ್ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದರು. ಘಟನೆಯ ಗಂಭೀರತೆ ಅರಿತ ಸಿಐ ಕೇಶವರಾವ್, ತಕ್ಷಣವೇ ಕಾನ್‌ಸ್ಟೇಬಲ್ ಮತ್ತು ಹೋಂ ಗಾರ್ಡ್‌ಗಳನ್ನು ಸ್ಥಳಕ್ಕೆ ಕಳುಹಿಸಿ, ಜೆಸಿಬಿ ಸಹಾಯದಿಂದ ಡ್ರೈನೇಜ್ ನೀರಿನ ಹರಿವನ್ನು ಬೇರೆಡೆಗೆ ತಿರುಗಿಸಿ ತೀವ್ರ ಶೋಧ ನಡೆಸಿದರು.

ನೀರು ಕಡಿಮೆಯಾಗುತ್ತಿದ್ದಂತೆ ಸ್ವಲ್ಪ ದೂರದಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದ ಆಭರಣಗಳು ಒಂದೊಂದಾಗಿ ಪತ್ತೆಯಾಗಿದ್ದು, ಪೊಲೀಸರು ಎಲ್ಲಾ 5 ಗ್ರಾಂ ಆಭರಣಗಳನ್ನು ಸುರಕ್ಷಿತವಾಗಿ ಹೊರತೆಗೆದು ದಂಪತಿಗೆ ಹಸ್ತಾಂತರಿಸಿದರು. ಹಬ್ಬ ಹಾಗೂ ಪೂಜೆಗಳ ಸಂದರ್ಭದಲ್ಲಿ ಬೆಲೆಬಾಳುವ ಆಭರಣ ಮತ್ತು ವಸ್ತುಗಳ ವಿಷಯದಲ್ಲಿ ಸಾರ್ವಜನಿಕರು ತೀವ್ರ ಎಚ್ಚರಿಕೆಯಿಂದ ಇರಬೇಕು ಎಂದು ಸ್ಟೀಲ್ ಪ್ಲಾಂಟ್ ಪೊಲೀಸ್ ಠಾಣೆ ಸಿಐ ಕೇಶವರಾವ್ ಹೇಳಿದ್ದಾರೆ.

ಕಸ್ತೂರಿ ರಂಗನ್‌ ವರದಿ ಜಾರಿಗೆ ಅವಕಾಶವಿಲ್ಲ: ಮಲೆನಾಡಿನ ರೈತರು ಆತಂಕಪಡಬೇಕಿಲ್ಲ ಎಂದ ಮಧು ಬಂಗಾರಪ್ಪ

0

ಬೆಂಗಳೂರು: ಕಸ್ತೂರಿ ರಂಗನ್ ಸಮಿತಿ ವರದಿ ಜಾರಿ ವಿಚಾರದಲ್ಲಿ ಮಲೆನಾಡಿನ ರೈತರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ಸಚಿವ ಮಧು ಬಂಗಾರಪ್ಪ ಸ್ಪಷ್ಟಪಡಿಸಿದ್ದಾರೆ.

ಪಶ್ಚಿಮ ಘಟ್ಟಗಳ ಸಂರಕ್ಷಣೆಗಾಗಿ ಕೇಂದ್ರ ಸರ್ಕಾರ 7ನೇ ಬಾರಿಗೆ ಕರಡು ಅಧಿಸೂಚನೆ ಹೊರಡಿಸಿದೆ. ಆದರೆ ರಾಜ್ಯ ಸರ್ಕಾರ ಈಗಾಗಲೇ ಕಸ್ತೂರಿ ರಂಗನ್ ವರದಿಯನ್ನು ತಿರಸ್ಕರಿಸಿ ತನ್ನ ನಿರ್ಧಾರವನ್ನು ಕೇಂದ್ರಕ್ಕೆ ತಿಳಿಸಿದೆ. ಹೀಗಾಗಿ ವರದಿ ಜಾರಿಗೆ ರಾಜ್ಯ ಸರ್ಕಾರ ಯಾವುದೇ ಕಾರಣಕ್ಕೂ ಅವಕಾಶ ನೀಡುವುದಿಲ್ಲ ಎಂದು ಅವರು ಹೇಳಿದ್ದಾರೆ.

ಕೇಂದ್ರದ ಕರಡು ಅಧಿಸೂಚನೆಯಲ್ಲಿ ಕರ್ನಾಟಕದ 1,576 ಗ್ರಾಮಗಳ ವ್ಯಾಪ್ತಿಯ 20,668 ಚದರ ಕಿ.ಮೀ ಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶ ಎಂದು ಗುರುತಿಸಲಾಗಿದೆ. ಇದರಲ್ಲಿ ಶಿವಮೊಗ್ಗ ಜಿಲ್ಲೆಯ 484 ಗ್ರಾಮಗಳು ಸೇರಿವೆ. ಜನವಸತಿ ಪ್ರದೇಶಗಳು ಹಾಗೂ ಕೃಷಿ ಭೂಮಿಯೂ ಪಟ್ಟಿಯಲ್ಲಿ ಒಳಗೊಂಡಿರುವುದರಿಂದ ಮಲೆನಾಡಿನ ರೈತರಲ್ಲಿ ಆತಂಕ ಮೂಡಿದೆ.

ಆದರೆ ರೈತರ ಹಿತಾಸಕ್ತಿಗೆ ಧಕ್ಕೆಯಾಗುವ ಯಾವುದೇ ಕ್ರಮಕ್ಕೂ ಸರ್ಕಾರ ಅವಕಾಶ ನೀಡುವುದಿಲ್ಲ. ಕರಡು ಅಧಿಸೂಚನೆಯನ್ನು ರಾಜ್ಯ ಸರ್ಕಾರ ವಿರೋಧಿಸಲಿದೆ. ಮಲೆನಾಡಿನ ಜನರು ಯಾವುದೇ ಆತಂಕ ಪಡಬೇಕಾಗಿಲ್ಲ ಎಂದು ಮಧು ಬಂಗಾರಪ್ಪ ಭರವಸೆ ನೀಡಿದ್ದಾರೆ.

ಈ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ವೈಯಕ್ತಿಕವಾಗಿಯೂ ಚರ್ಚಿಸಿದ್ದೇನೆ. ಮುಖ್ಯಮಂತ್ರಿಗಳು ಕೂಡ ಕರಡು ಅಧಿಸೂಚನೆಯನ್ನು ವಿರೋಧಿಸುವುದಾಗಿ ತಿಳಿಸಿದ್ದಾರೆ. ಸರ್ಕಾರ ರೈತರ ಪರವಾಗಿ ನಿಲ್ಲಲಿದೆ ಎಂದು ಸಚಿವರು ಹೇಳಿದ್ದಾರೆ.

ಇದೇ ವೇಳೆ, ವಿಪಕ್ಷ ನಾಯಕರು ಕೇಂದ್ರದ ಕರಡು ಅಧಿಸೂಚನೆಯನ್ನು ಖಂಡಿಸುವ ಬದಲು ಮಲೆನಾಡಿನ ರೈತರಲ್ಲಿ ಗೊಂದಲ ಮೂಡಿಸುವ ರೀತಿಯಲ್ಲಿ ಹೇಳಿಕೆ ನೀಡುತ್ತಿದ್ದಾರೆ ಎಂದು ಮಧು ಬಂಗಾರಪ್ಪ ಆರೋಪಿಸಿದ್ದಾರೆ. ವಿಧಾನಸಭೆಯಲ್ಲಿ ಈ ಮಹತ್ವದ ವಿಚಾರದ ಕುರಿತು ಚರ್ಚಿಸುವ ಬದಲು ಗದ್ದಲ ಸೃಷ್ಟಿಸಿ ಕಲಾಪಕ್ಕೆ ಅಡ್ಡಿಪಡಿಸಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ತಮ್ಮ ತಂದೆ ಎಸ್. ಬಂಗಾರಪ್ಪ ಅವರು ಸದಾ ರೈತರು ಹಾಗೂ ಜನಸಾಮಾನ್ಯರ ಪರವಾಗಿ ನಿಂತಿದ್ದರು. ಅವರ ಆಶಯದಂತೆ ತಾವು ಕೂಡ ರೈತರ ಪರವಾಗಿ ಕೆಲಸ ಮಾಡುತ್ತಿದ್ದು, ಯಾವುದೇ ಕಾರಣಕ್ಕೂ ರೈತರಿಗೆ ಅನ್ಯಾಯವಾಗಲು ಬಿಡುವುದಿಲ್ಲ ಎಂದು ಮಧು ಬಂಗಾರಪ್ಪ ತಿಳಿಸಿದ್ದಾರೆ.

ನೇಪಾಳದಲ್ಲಿ ರಣಭೀಕರ ಪ್ರವಾಹ: 8 ಮಂದಿ ಸಾವು, 41 ಭದ್ರತಾ ಸಿಬ್ಬಂದಿ ಸೇರಿ ನೂರಾರು ಮಂದಿ ನಾಪತ್ತೆ

ಕಠ್ಮಂಡು: ನೇಪಾಳದಲ್ಲಿ ಭೋಟೆ ಕೋಶಿ ನದಿಯಲ್ಲಿ ಉಂಟಾದ ಹಠಾತ್ ಪ್ರವಾಹ ಭಾರೀ ಅನಾಹುತ ಸೃಷ್ಟಿಸಿದೆ. ಪ್ರವಾಹದಲ್ಲಿ ಕನಿಷ್ಠ 8 ಮಂದಿ ಮೃತಪಟ್ಟಿದ್ದು, 41 ಭದ್ರತಾ ಸಿಬ್ಬಂದಿ ಸೇರಿದಂತೆ ನೂರಾರು ಮಂದಿ ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ.

ನಾಪತ್ತೆಯಾಗಿರುವ 41 ಭದ್ರತಾ ಸಿಬ್ಬಂದಿಯಲ್ಲಿ 32 ಮಂದಿ ನೇಪಾಳ ಪೊಲೀಸರು ಹಾಗೂ 9 ಮಂದಿ ಸಶಸ್ತ್ರ ಪೊಲೀಸ್ ಪಡೆಯ ಸಿಬ್ಬಂದಿ ಸೇರಿದ್ದಾರೆ. ಈವರೆಗೆ 8 ಮೃತದೇಹಗಳನ್ನು ಪತ್ತೆಹಚ್ಚಲಾಗಿದ್ದು, ನಾಪತ್ತೆಯಾಗಿರುವವರಿಗಾಗಿ ರಕ್ಷಣಾ ತಂಡಗಳು ಭರದಿಂದ ಶೋಧ ಕಾರ್ಯ ನಡೆಸುತ್ತಿವೆ.

ಸ್ಥಳೀಯ ಕಾಲಮಾನ ಇಂದು ಬೆಳಗ್ಗೆ 9 ಗಂಟೆ ಸುಮಾರಿಗೆ ಭೋಟೆ ಕೋಶಿ ನದಿಯಲ್ಲಿ ಹಠಾತ್ ಪ್ರವಾಹ ಉಂಟಾಗಿದೆ. ನದಿ ದಂಡೆಯಲ್ಲಿರುವ ಜನರು ಕೂಡಲೇ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. ನದಿಯುದ್ದಕ್ಕೂ ವಾಸಿಸುವ ನಿವಾಸಿಗಳು ಹೆಚ್ಚಿನ ನಿಗಾ ವಹಿಸುವಂತೆ ಸೂಚಿಸಲಾಗಿದೆ.

ನೇಪಾಳ-ಟಿಬೆಟ್ ಗಡಿಯ ಸಮೀಪದ ರಸುವಾ ಜಿಲ್ಲೆಯಲ್ಲಿ ಪ್ರವಾಹದ ರಭಸಕ್ಕೆ ಇಡೀ ಗ್ರಾಮವೇ ಕೊಚ್ಚಿಹೋಗಿದೆ ಎಂದು ವರದಿಯಾಗಿದೆ. ಪ್ರಾಥಮಿಕ ಮಾಹಿತಿಯಂತೆ ಸುಮಾರು 1,000 ಮಂದಿ ಪ್ರವಾಹದಲ್ಲಿ ಕೊಚ್ಚಿಹೋಗಿರುವ ಶಂಕೆ ವ್ಯಕ್ತವಾಗಿದ್ದು, ಈ ಸಂಖ್ಯೆ ಇನ್ನೂ ಅಧಿಕೃತವಾಗಿ ದೃಢಪಟ್ಟಿಲ್ಲ.

ರಸುವಾ ಜಿಲ್ಲೆಯ ಸಯಾಪ್ರು ಬೆಸಿ ಹಾಗೂ ತಿಮುರೆ ಪ್ರದೇಶಗಳು ಪ್ರವಾಹದಿಂದ ತೀವ್ರವಾಗಿ ಹಾನಿಗೊಳಗಾಗಿವೆ. ಹಲವು ಗ್ರಾಮಗಳು ಹಾಗೂ ನಿರ್ಮಾಣ ಹಂತದಲ್ಲಿದ್ದ ಯೋಜನಾ ಪ್ರದೇಶಗಳು ನೀರಿನ ರಭಸಕ್ಕೆ ಕೊಚ್ಚಿಹೋಗಿವೆ ಎನ್ನಲಾಗಿದೆ.

ಪ್ರವಾಹ ಪೀಡಿತ ಪ್ರದೇಶಗಳಲ್ಲಿ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳು ಮುಂದುವರಿದಿದ್ದು, ನಾಪತ್ತೆಯಾದವರಿಗಾಗಿ ಭದ್ರತಾ ಪಡೆಗಳು ಹಾಗೂ ರಕ್ಷಣಾ ತಂಡಗಳು ಯುದ್ಧೋಪಾದಿಯಲ್ಲಿ ಶೋಧ ನಡೆಸುತ್ತಿವೆ. ಸದ್ಯ ಪರಿಸ್ಥಿತಿ ಗಂಭೀರವಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಆತಂಕವೂ ವ್ಯಕ್ತವಾಗಿದೆ.

187 ಕೋಟಿ ಹಗರಣ, ಅಧಿಕಾರದ ಮದ: ನಾಗೇಂದ್ರ ರಾಜೀನಾಮೆಗೆ ಪಟ್ಟು ಹಿಡಿದ ವಿಜಯೇಂದ್ರ

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಲೂಟಿ ಹಗರಣದ ಆರೋಪಿ ಸಚಿವ ನಾಗೇಂದ್ರ ಅವರು ತನಿಖೆಯ ಬಳಿಕ ನಿರಪರಾಧಿ ಎಂದು ಸಾಬೀತಾದರೆ ಅವರನ್ನು ಮುಖ್ಯಮಂತ್ರಿಯಾಗಿ ಮಾಡಿಕೊಳ್ಳಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸವಾಲು ಹಾಕಿದ್ದಾರೆ.

ಮಲ್ಲೇಶ್ವರದ ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ವಿಜಯೇಂದ್ರ, ಇ.ಡಿ. ಚಾರ್ಜ್‌ಶೀಟ್‌ನಲ್ಲೂ ನಾಗೇಂದ್ರ ಹೆಸರು ಉಲ್ಲೇಖವಾಗಿದೆ ಎಂದರು. ಶಿವಮೊಗ್ಗದಲ್ಲಿ ಪ್ರಾಮಾಣಿಕ ಅಧಿಕಾರಿ, ಬೋವಿ ಸಮಾಜದ ಚಂದ್ರಶೇಖರ್ ಆತ್ಮಹತ್ಯೆ ಮಾಡಿಕೊಂಡಿದ್ದು, ಅವರ ಡೆತ್ ನೋಟಿನಲ್ಲೂ ಅಂದಿನ ಸಚಿವ ನಾಗೇಂದ್ರ ಅವರ ಮೌಖಿಕ ಆದೇಶದ ಮೇರೆಗೆ ಹಣವನ್ನು ತೆಲಂಗಾಣ ರಾಜ್ಯಕ್ಕೆ ವರ್ಗಾಯಿಸಿದ್ದಾಗಿ ತಿಳಿಸಿದ್ದರು ಎಂದು ಗಮನ ಸೆಳೆದರು.

ಬಿಜೆಪಿ ಎತ್ತಿದ ಪ್ರಶ್ನೆ ಗಂಭೀರವಾಗಿದ್ದು, ದಲಿತರ ಅಭಿವೃದ್ಧಿಗೆ ಮೀಸಲಿಟ್ಟ ಹಣವನ್ನು ಕಾಂಗ್ರೆಸ್ಸಿನವರು ಕೊಳ್ಳೆ ಹೊಡೆದಿದ್ದಾರೆ ಎಂದ ವಿಜಯೇಂದ್ರ, ಇಂಥ ಭ್ರಷ್ಟರನ್ನು ಯಾವುದೇ ಕಾರಣಕ್ಕೂ ಮುಂದುವರೆಸಬಾರದು, ಸಚಿವ ಸ್ಥಾನದಿಂದ ತಕ್ಷಣ ಕೈಬಿಡಬೇಕು ಎಂದು ಆಗ್ರಹಿಸಿದರು. ಅಧಿವೇಶನ ಆರಂಭಕ್ಕೂ ಮೊದಲೇ ಇದನ್ನು ಹೇಳಲಾಗಿತ್ತು ಎಂದ ಅವರು, ಉತ್ತರ ಕರ್ನಾಟಕದ ಸಮಸ್ಯೆಗಳು, ಬರಗಾಲ, ನೀರಾವರಿ ಯೋಜನೆಗಳು, ಕೆಪಿಎಸ್‌ಸಿ ಹಗರಣದ ಕುರಿತು ಅಧಿವೇಶನದಲ್ಲಿ ಚರ್ಚೆ ಆಗಬೇಕಿದೆ ಎಂದರು.

ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿದರೆ ಅವರು ಭಂಡತನದಿಂದ ಮೆರೆಯುತ್ತಿದ್ದಾರೆ ಎಂದ ವಿಜಯೇಂದ್ರ, ಅಧಿಕಾರದ ಮದದಿಂದ ಕಾಂಗ್ರೆಸ್ ಸರ್ಕಾರ ನಡೆದುಕೊಳ್ಳುತ್ತಿದ್ದು, ಈ ಮದವನ್ನು ಇಳಿಸುವ ಶಕ್ತಿ ಬಿಜೆಪಿಗೆ ಇದೆ ಎಂದು ಎಚ್ಚರಿಸಿದರು. ಸದನದಲ್ಲಿ ಹೋರಾಟ ಮಾಡುತ್ತಿದ್ದರೆ ತಮ್ಮನ್ನು ಗೂಂಡಾಗಳೆಂದು ಕರೆಯಲಾಗಿದೆ ಎಂದೂ, ದಲಿತರ ಪರವಾಗಿ ಧ್ವನಿ ಎತ್ತಿದ ಬಿಜೆಪಿ-ಜೆಡಿಎಸ್‌ನವರನ್ನು ಗೂಂಡಾಗಳೆಂದು ಕರೆಯುವುದೇ ಎಂದು ಪ್ರಶ್ನಿಸಿದರು.

187 ಕೋಟಿ ರೂ. ಹಣ ಲೂಟಿಯಾಗಿದ್ದು, ದಲಿತರಿಗೆ ನ್ಯಾಯ ಕೊಡಿಸುವ ನಿಟ್ಟಿನಲ್ಲಿ ಆ ಹಣ ವಾಪಸ್ ಬಂದು ಆ ಸಮುದಾಯದ ಅಭಿವೃದ್ಧಿಗೆ ಬಳಕೆಯಾಗಬೇಕು ಎಂದು ತಿಳಿಸಿದ ವಿಜಯೇಂದ್ರ, ಎಲ್ಲಿಯವರೆಗೆ ಬೇಕೋ ಅಲ್ಲಿಯವರೆಗೆ ಹೋರಾಟಕ್ಕೆ ಸಿದ್ಧ ಎಂದು ಪ್ರಕಟಿಸಿದರು.

ಪ್ರಶ್ನೆಪತ್ರಿಕೆ ಸೋರಿಕೆ ಆರೋಪ: ಡ್ರಗ್ ಇನ್ಸ್‌ಪೆಕ್ಟರ್ ಹುದ್ದೆ ನೇಮಕಾತಿ ಪ್ರಕ್ರಿಯೆ ರದ್ದುಪಡಿಸಿದ MPSC

0

ಮುಂಬೈ: ಮಹಾರಾಷ್ಟ್ರ ಲೋಕಸೇವಾ ಆಯೋಗ ನಡೆಸಿದ್ದ ಡ್ರಗ್ ಇನ್ಸ್‌ಪೆಕ್ಟರ್, ಗ್ರೂಪ್-ಬಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ರದ್ದುಪಡಿಸಲಾಗಿದೆ. ಮಾರ್ಚ್ 22ರಂದು ನಡೆದಿದ್ದ ಸ್ಕ್ರೀನಿಂಗ್ ಪರೀಕ್ಷೆಯಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಅಕ್ರಮ ನಡೆದಿರುವ ಆರೋಪಗಳ ಕುರಿತು ನಡೆಸಿದ ಪ್ರಾಥಮಿಕ ತನಿಖೆಯ ಬಳಿಕ ಆಯೋಗ ಈ ನಿರ್ಧಾರ ಕೈಗೊಂಡಿದೆ.

ಆಹಾರ ಮತ್ತು ಔಷಧ ಆಡಳಿತ ಇಲಾಖೆಯ ಡ್ರಗ್ ಇನ್ಸ್‌ಪೆಕ್ಟರ್ ಹುದ್ದೆಗಳಿಗಾಗಿ ಈ ಪರೀಕ್ಷೆ ನಡೆದಿತ್ತು. ಪರೀಕ್ಷೆಗೂ ಎರಡು ದಿನ ಮುನ್ನ, ಅಂದರೆ ಮಾರ್ಚ್ 20ರಂದೇ ಕೆಲ ಅಭ್ಯರ್ಥಿಗಳಿಗೆ ಪ್ರಶ್ನೆಪತ್ರಿಕೆ ಅಥವಾ ಅದರಲ್ಲಿದ್ದ ಪ್ರಶ್ನೆಗಳು ಲಭ್ಯವಾಗಿದ್ದವು ಎಂಬ ಆರೋಪ ಕೇಳಿಬಂದಿತ್ತು. ಬಳಿಕ ಪ್ರಶ್ನೆಗಳು ಸಾಮಾಜಿಕ ಜಾಲತಾಣ ಹಾಗೂ ಎಲೆಕ್ಟ್ರಾನಿಕ್ ಮಾಧ್ಯಮಗಳ ಮೂಲಕ ಹರಿದಾಡಿದ್ದವು ಎನ್ನಲಾಗಿದೆ.

ಅಭ್ಯರ್ಥಿಗಳು ಹಾಗೂ ಜನಪ್ರತಿನಿಧಿಗಳಿಂದ ಇ-ಮೇಲ್ ಮೂಲಕ ದೂರುಗಳು ಬಂದ ಹಿನ್ನೆಲೆಯಲ್ಲಿ ಎಂಪಿಎಸ್‌ಸಿ ಪ್ರಾಥಮಿಕ ತನಿಖೆ ನಡೆಸಿತ್ತು. ಪರೀಕ್ಷಾ ಪ್ರಕ್ರಿಯೆಯಲ್ಲಿ ಗಂಭೀರ ಅಕ್ರಮಗಳ ಆರೋಪಗಳು ಕಂಡುಬಂದ ಹಿನ್ನೆಲೆಯಲ್ಲಿ ಸಂಪೂರ್ಣ ನೇಮಕಾತಿ ಪ್ರಕ್ರಿಯೆಯನ್ನೇ ರದ್ದುಪಡಿಸಲು ಆಯೋಗ ನಿರ್ಧರಿಸಿದೆ. ಹೊಸ ಪರೀಕ್ಷೆ ನಡೆಸುವ ಕುರಿತು ಮುಂದಿನ ಅಧಿಕೃತ ಮಾಹಿತಿ ಹೊರಬೀಳಬೇಕಿದೆ.

ಪರೀಕ್ಷೆ ರದ್ದಾದ ಬೆನ್ನಲ್ಲೇ ಮಹಾರಾಷ್ಟ್ರ ನವನಿರ್ಮಾಣ ಸೇನೆ ನಾಯಕ ಸಂದೀಪ್ ದೇಶಪಾಂಡೆ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ಆರೋಪ ಗಂಭೀರವಾಗಿ ಕಂಡುಬಂದಿದ್ದರೆ ಈವರೆಗೆ ಎಫ್‌ಐಆರ್ ಏಕೆ ದಾಖಲಿಸಿಲ್ಲ ಎಂದು ಪ್ರಶ್ನಿಸಿರುವ ಅವರು, ಪ್ರಕರಣದಲ್ಲಿ ಯಾರನ್ನಾದರೂ ರಕ್ಷಿಸಲು ಸರ್ಕಾರ ಪ್ರಯತ್ನಿಸುತ್ತಿದೆಯೇ ಎಂಬುದರ ಕುರಿತು ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.

ಪ್ರಶ್ನೆಪತ್ರಿಕೆ ಸೋರಿಕೆಯಲ್ಲಿ ಸರ್ಕಾರಿ ಸಂಸ್ಥೆಗಳ ಯಾವುದೇ ರೀತಿಯ ಒಳಸಂಚು ಅಥವಾ ಕೈವಾಡವಿದೆಯೇ ಎಂಬುದನ್ನೂ ಸಮಗ್ರವಾಗಿ ತನಿಖೆ ನಡೆಸಬೇಕು ಎಂದೂ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದೂ ಅವರು ಒತ್ತಾಯಿಸಿದ್ದಾರೆ. ನೇಮಕಾತಿ ಪ್ರಕ್ರಿಯೆ ರದ್ದಾಗಿರುವುದರಿಂದ ಈಗಾಗಲೇ ಪರೀಕ್ಷೆ ಬರೆದ ಅಭ್ಯರ್ಥಿಗಳಿಗೆ ಅನಿಶ್ಚಿತತೆ ಎದುರಾಗಿದೆ.

ನೇಪಾಳದಲ್ಲಿ ಭೀಕರ ಪ್ರವಾಹ: ಇಡೀ ಗ್ರಾಮವೇ ಕೊಚ್ಚಿಹೋಗಿ 1,000 ಜನ ನಾಪತ್ತೆ ಶಂಕೆ!

0

ಕಠ್ಮಂಡು: ಹಿಮಾಲಯ ಪರ್ವತ ಶ್ರೇಣಿಯಲ್ಲಿರುವ ನೇಪಾಳದಲ್ಲಿ ಭೀಕರ ಪ್ರವಾಹ ಸಂಭವಿಸಿದ್ದು, ಭಾರೀ ಪ್ರಮಾಣದಲ್ಲಿ ಹಾನಿಯಾಗಿದೆ. ನೇಪಾಳದ ರಸುವಾದಲ್ಲಿ ಟಿಬೆಟ್ ಗಡಿಯ ಬಳಿಯಿರುವ ಇಡೀ ಗ್ರಾಮವೇ ಕೊಚ್ಚಿಹೋಗಿದ್ದು, ಅಪಾರ ಪ್ರಮಾಣದ ಜೀವಹಾನಿಯಾಗಿರುವ ಭೀತಿ ಹೆಚ್ಚಾಗಿದೆ. ಸ್ಥಳೀಯ ಕಾಲಮಾನ ಇಂದು ಬೆಳಗ್ಗೆ 9 ಗಂಟೆ ಸುಮಾರಿಗೆ ಈ ಪ್ರದೇಶದಲ್ಲಿ ಪ್ರವಾಹ ಉಂಟಾಗಿದ್ದು,

ನದಿ ದಂಡೆಯಲ್ಲಿರುವ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. ಭೋಟೆ ಕೋಶಿ ನದಿಯ ಉದ್ದಕ್ಕೂ ವಾಸಿಸುವ ನಿವಾಸಿಗಳು ಹೆಚ್ಚಿನ ನಿಗಾ ವಹಿಸುವಂತೆ ಸಲಹೆ ನೀಡಲಾಗಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಸುಮಾರು 1,000 ಜನರು ಪ್ರವಾಹದಲ್ಲಿ ಕೊಚ್ಚಿಹೋಗಿದ್ದಾರೆ ಎಂದು ಶಂಕಿಸಲಾಗಿದ್ದು, ಈ ಅಂಕಿ-ಅಂಶ ಇನ್ನೂ ಅಧಿಕೃತವಾಗಿಲ್ಲ. ರಕ್ಷಣಾ ತಂಡಗಳು ಈಗಾಗಲೇ ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆ ನಡೆಸುತ್ತಿದ್ದು, ಸಾವು-ನೋವುಗಳ ಸಂಪೂರ್ಣ ವಿವರ ಇನ್ನೂ ಸ್ಪಷ್ಟವಾಗಿಲ್ಲ.

ರಸುವಾ ಜಿಲ್ಲೆಯಲ್ಲಿ ಉಂಟಾದ ಹಠಾತ್ ಪ್ರವಾಹ ಹಲವು ಪ್ರದೇಶಗಳಲ್ಲಿ ವ್ಯಾಪಕ ಹಾನಿಯನ್ನುಂಟುಮಾಡಿದ್ದು, ಸ್ಯಾಪ್ರುಬೆಸಿ ಮತ್ತು ತಿಮುರೆ ಪರ್ವತ ಪ್ರದೇಶಗಳು ತೀವ್ರವಾಗಿ ಬಾಧಿತವಾಗಿವೆ. ಇಲ್ಲಿನ ಕೆಲವು ಹಳ್ಳಿಗಳೇ ಕೊಚ್ಚಿಹೋಗಿದ್ದು, ಯೋಜನಾ ಸ್ಥಳಗಳೂ ಕೊಚ್ಚಿಹೋಗಿವೆ ಎಂದು ವರದಿಯಾಗಿದೆ. ಸದ್ಯ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ನೀರಿನ ರಭಸಕ್ಕೆ ಸಿಲುಕಿ ಕೊಚ್ಚಿಹೋಗಿರುವ ಜನರ ಹುಡುಕಾಟ ನಡೆಯುತ್ತಿದೆ. ಪರಿಸ್ಥಿತಿ ತೀರಾ ಗಂಭೀರವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೈಸೂರು ದಸರಾದಲ್ಲಿ ಕಂಬಳ ಫಿಕ್ಸ್: ಸಿಎಂ ಸೂಚನೆ, ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟನೆ

0

ಮೈಸೂರು: ಮೈಸೂರು ದಸರಾ ಮಹೋತ್ಸವ-2026 ಈ ಬಾರಿ ಮತ್ತಷ್ಟು ವೈಭವ ಪಡೆದುಕೊಳ್ಳುವ ಸಾಧ್ಯತೆ ಇದೆ. ನಾಡಹಬ್ಬದ ಅಂಗವಾಗಿ ಕಂಬಳ ಆಯೋಜಿಸಲು ರಾಜ್ಯ ಸರ್ಕಾರ ಮುಂದಾಗಿದ್ದು, ಕಂಬಳಕ್ಕಾಗಿ ಈಗಾಗಲೇ ಸ್ಥಳ ಗುರುತಿಸಲಾಗಿದೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ತಿಳಿಸಿದ್ದಾರೆ.

ವೀರನಹೊಸಹಳ್ಳಿಯಲ್ಲಿ ದಸರಾ ಗಜಪಯಣಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದ ಸಚಿವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡ ದಸರಾ ಸಂದರ್ಭದಲ್ಲಿ ಕಂಬಳ ನಡೆಸುವಂತೆ ಸೂಚನೆ ನೀಡಿದ್ದಾರೆ ಎಂದು ಹೇಳಿದರು.

ಹೀಗಾಗಿ ಈ ಬಾರಿಯ ದಸರಾ ಕಾರ್ಯಕ್ರಮಗಳ ಪಟ್ಟಿಯಲ್ಲಿ ಕಂಬಳ ಪ್ರಮುಖ ಆಕರ್ಷಣೆಯಾಗಲಿದೆ. ಗುರುತಿಸಲಾಗಿರುವ ಸ್ಥಳದಲ್ಲೇ ಕಂಬಳ ಆಯೋಜಿಸಲಾಗುವುದು ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.

ಇತ್ತ ದಸರಾ ಜಂಬೂಸವಾರಿಯ ಪ್ರಮುಖ ಆಕರ್ಷಣೆಯಾಗಿರುವ ಚಿನ್ನದ ಅಂಬಾರಿ ಹೊರುವ ಆನೆಯ ಆಯ್ಕೆ ಇನ್ನೂ ಬಾಕಿಯಿದೆ. ಗಜಪಡೆ ತಾಲೀಮು ನಡೆಸಿದ ಬಳಿಕ ಅಂಬಾರಿ ಆನೆಯನ್ನು ಅಂತಿಮಗೊಳಿಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.

ಇಂದಿನಿಂದ ಗಜಪಯಣ ಆರಂಭವಾಗಿದ್ದು, ವೀರನಹೊಸಹಳ್ಳಿಯಲ್ಲಿ ದಸರಾ ಆನೆಗಳಿಗೆ ವಿಶೇಷ ಪೂಜೆ ಸಲ್ಲಿಸಲಾಗಿದೆ.

25 ವರ್ಷಗಳ ಸೇವೆ ಬಳಿಕ ಅಭಿಮನ್ಯುವಿಗೆ ವಿದಾಯ

ದಸರಾ ಗಜಪಡೆಯ ಹಿರಿಯ ಆನೆ ಅಭಿಮನ್ಯು ಈ ಬಾರಿ ನಿವೃತ್ತಿಯಾಗಿರುವುದು ಗಜಪಯಣದ ಪ್ರಮುಖ ಬೆಳವಣಿಗೆಯಾಗಿದೆ. ಬರೋಬ್ಬರಿ 25 ವರ್ಷಗಳ ಕಾಲ ದಸರಾ ಮಹೋತ್ಸವದಲ್ಲಿ ಭಾಗವಹಿಸಿದ್ದ ಅಭಿಮನ್ಯು ಆರು ಬಾರಿ ಚಿನ್ನದ ಅಂಬಾರಿ ಹೊತ್ತಿದ್ದಾನೆ.

ನಿವೃತ್ತಿ ಹಿನ್ನೆಲೆಯಲ್ಲಿ ಅಭಿಮನ್ಯುವಿಗೆ ಸಾಂಪ್ರದಾಯಿಕ ಪೂಜೆ ಸಲ್ಲಿಸಿ ಬೀಳ್ಕೊಡಲಾಗಿದೆ. ಆದರೆ ಅಭಿಮನ್ಯುವನ್ನು ಸಂಪೂರ್ಣವಾಗಿ ದಸರಾ ಆಚರಣೆಯಿಂದ ದೂರ ಇಡಲಾಗುತ್ತದೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ನಿಶಾನೆ ಆನೆಯಾಗಿ ಅಭಿಮನ್ಯುವನ್ನು ಕರೆತರುವ ಕುರಿತು ಯಾವುದೇ ಅಂತಿಮ ನಿರ್ಧಾರವಾಗಿಲ್ಲ. ಸಾಧ್ಯತೆಗಳನ್ನು ಪರಿಶೀಲಿಸಿದ ಬಳಿಕ ಈ ಬಗ್ಗೆ ತೀರ್ಮಾನಿಸಲಾಗುವುದು ಎಂದು ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.

ನಾಲ್ಕನೇ ವ್ಯಕ್ತಿಯಿಂದ ಆಡಿಟ್ ಮಾಡಿಸುವ ಅಗತ್ಯವಿದೆಯೇ? ಕಳಪೆ ಗುಣಮಟ್ಟದ ಕಾಮಗಾರಿಗೆ ಮೋದಿ ಗರಂ

0

ನವದೆಹಲಿ: ನಿರ್ಮಾಣ ಹಾಗೂ ಸಾರ್ವಜನಿಕ ಮೂಲಸೌಕರ್ಯ ಯೋಜನೆಗಳಲ್ಲಿ ಕಂಡುಬರುತ್ತಿರುವ ಕಳಪೆ ಗುಣಮಟ್ಟದ ಕುರಿತು ಪ್ರಧಾನಮಂತ್ರಿ ನರೇಂದ್ರ ಮೋದಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕಾಮಗಾರಿಗಳ ಗುಣಮಟ್ಟ ಪರಿಶೀಲನೆಗೆ ಈಗ ನಾಲ್ಕನೇ ವ್ಯಕ್ತಿಗಳಿಂದ ಆಡಿಟ್ ಮೊರೆ ಹೋಗಬೇಕೆ ಎಂದು ಕೇಂದ್ರ ಸರ್ಕಾರದ ಕಾರ್ಯದರ್ಶಿಗಳು ಹಾಗೂ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳನ್ನು ಪ್ರಶ್ನಿಸಿದ ಪ್ರಧಾನಿ, ಸಾಮಾನ್ಯವಾಗಿ ಯೋಜನೆಗಳ ಗುಣಮಟ್ಟ ಪರಿಶೀಲನೆಗೆ ‘ಥರ್ಡ್ ಪಾರ್ಟಿ’ ಆಡಿಟ್ ವ್ಯವಸ್ಥೆ ಚಾಲ್ತಿಯಲ್ಲಿದ್ದರೂ ಅದು ನಿರೀಕ್ಷಿತ ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಮಂಗಳವಾರ ನಡೆದ ಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಮೋದಿ, ಕಾಮಗಾರಿಗಳಲ್ಲಿ ಗುಣಮಟ್ಟದ ಕೊರತೆಯನ್ನು ಯಾವುದೇ ಕಾರಣಕ್ಕೂ ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ಉನ್ನತ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ ಎಂದು ವರದಿಯಾಗಿದೆ.

ಈ ಸಭೆಯಲ್ಲಿ ರೈಲ್ವೆ, ರಸ್ತೆ ಮತ್ತು ವಿದ್ಯುತ್ ಕ್ಷೇತ್ರಗಳಿಗೆ ಸಂಬಂಧಿಸಿದಂತೆ 9 ರಾಜ್ಯಗಳಲ್ಲಿ ನಡೆಯುತ್ತಿರುವ ಸುಮಾರು 30,000 ಕೋಟಿ ರೂ. ವೆಚ್ಚದ ಆರು ಪ್ರಮುಖ ಮೂಲಸೌಕರ್ಯ ಯೋಜನೆಗಳ ಪ್ರಗತಿಯನ್ನು ಪ್ರಧಾನಿ ಪರಿಶೀಲಿಸಿದರು. ಮೂಲಸೌಕರ್ಯ ಕಾಮಗಾರಿಗಳನ್ನು ಬಿಡಿಭಾಗಗಳಾಗಿ ನೋಡದೆ ಸಮಗ್ರ ದೃಷ್ಟಿಕೋನದಿಂದ ಮೇಲ್ವಿಚಾರಣೆ ನಡೆಸಬೇಕು ಎಂದೂ, ತ್ವರಿತ ಅನುಷ್ಠಾನದ ಜೊತೆಗೆ ರಾಜಿ ಮಾಡಿಕೊಳ್ಳದೆ ಗುಣಮಟ್ಟವೂ ಇರಬೇಕು ಎಂದೂ ಅವರು ತಿಳಿಸಿದರು. ಸಚಿವಾಲಯಗಳು, ರಾಜ್ಯ ಸರ್ಕಾರಗಳು ಮತ್ತು ಅನುಷ್ಠಾನ ಸಂಸ್ಥೆಗಳು ಆಧುನಿಕ ತಂತ್ರಜ್ಞಾನ ಅಳವಡಿಸಿಕೊಂಡು ಪ್ರತಿ ಹಂತದಲ್ಲೂ ಗುಣಮಟ್ಟದ ಮೇಲ್ವಿಚಾರಣೆ ಬಲಪಡಿಸಬೇಕು ಎಂದು ಪ್ರಧಾನಿ ಕರೆ ನೀಡಿದರು.

ವಿದ್ಯುತ್ ಉತ್ಪಾದನೆ ಹೆಚ್ಚಿಸಿದರೆ ಮಾತ್ರ ಸಾಲದು, ಸರಿಯಾದ ಪ್ರಸರಣ ಮಾರ್ಗಗಳೂ ಇರಬೇಕು ಎಂದ ಮೋದಿ, ಇದು ಕಾಲುವೆಗಳನ್ನು ನಿರ್ಮಿಸದೆ ಅಣೆಕಟ್ಟು ಕಟ್ಟಿದಂತೆ ಯಾವುದೇ ಪ್ರಯೋಜನ ನೀಡುವುದಿಲ್ಲ ಎಂದು ವಿದ್ಯುತ್ ಯೋಜನೆಗಳ ಪರಿಶೀಲನೆ ವೇಳೆ ಹೇಳಿದರು.

ಹೆಚ್ಚುತ್ತಿರುವ ಸೈಬರ್ ವಂಚನೆ ಮತ್ತು ಡಿಜಿಟಲ್ ಅರೆಸ್ಟ್ ಪ್ರಕರಣಗಳ ಕುರಿತು ಚರ್ಚಿಸಿದ ಪ್ರಧಾನಿ, ತರಬೇತಿ, ಜಾಗೃತಿ ಮತ್ತು ಶಿಕ್ಷಣದ ಮೂಲಕ ಇವುಗಳ ತಡೆಗಟ್ಟುವಿಕೆ ಬಲಪಡಿಸಬೇಕು ಎಂದರು. ಹಿರಿಯ ನಾಗರಿಕರು, ಯುವಕರು ಸೇರಿದಂತೆ ದುರ್ಬಲ ವರ್ಗದವರನ್ನು ಗುರಿಯಾಗಿಸಿಕೊಂಡು ನಡೆಯುವ ಸೈಬರ್ ಅಪರಾಧಗಳ ಎಚ್ಚರಿಕೆ ಚಿಹ್ನೆಗಳು ಮತ್ತು ಸುರಕ್ಷಿತ ಡಿಜಿಟಲ್ ಪದ್ಧತಿಗಳ ಬಗ್ಗೆ ನಿರಂತರ ಜಾಗೃತಿ ಮೂಡಿಸಲು ಸೂಚಿಸಿದರು. ಈ ಸಭೆಯಲ್ಲಿ ಗೃಹ ಕಾರ್ಯದರ್ಶಿ ಗೋವಿಂದ್ ಮೋಹನ್, ಸೈಬರ್ ಅಪರಾಧ ನಿಯಂತ್ರಣಕ್ಕೆ 20 ರಾಜ್ಯಗಳು ಕೈಗೊಂಡಿರುವ ಕ್ರಮಗಳ ಕುರಿತು ವಿವರವಾದ ಮಾಹಿತಿ ನೀಡಿದರು.

ಶ್ರೀಲಂಕಾ 290 ರನ್‌ʼಗಳಿಗೆ ಆಲೌಟ್: 213 ರನ್ʼಗಳ ಭರ್ಜರಿ ಮುನ್ನಡೆ ಪಡೆದ ಟೀಂ ಇಂಡಿಯಾ

0

ಕೊಲಂಬೊ: ಟೀಂ ಇಂಡಿಯಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್‌ನಲ್ಲಿ ಶ್ರೀಲಂಕಾ ತಂಡ 290 ರನ್‌ಗಳಿಗೆ ಆಲೌಟ್ ಆಗಿದೆ. ಕೊಲಂಬೊದ ಸಿಂಹಳೀಸ್ ಸ್ಪೋರ್ಟ್ಸ್ ಕ್ಲಬ್ (SSC) ಮೈದಾನದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಭಾರತ ಭರ್ಜರಿ ಮುನ್ನಡೆ ಸಾಧಿಸಿದ್ದು, ಲಂಕಾ ತಂಡಕ್ಕೆ ಫಾಲೋಆನ್ ಹೇರಿದೆ.

ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ಶುಭ್‌ಮನ್ ಗಿಲ್ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದರು. ಅದರಂತೆ ಮೊದಲ ಇನಿಂಗ್ಸ್ ಆರಂಭಿಸಿದ ಭಾರತ ತಂಡವು 9 ವಿಕೆಟ್‌ಗಳ ನಷ್ಟಕ್ಕೆ 503 ರನ್ ಗಳಿಸಿ ಡಿಕ್ಲೇರ್ ಮಾಡಿಕೊಂಡಿತ್ತು.

ಇದಕ್ಕುತ್ತರವಾಗಿ ಮೊದಲ ಇನಿಂಗ್ಸ್ ಆರಂಭಿಸಿದ ಶ್ರೀಲಂಕಾ ತಂಡಕ್ಕೆ ಭಾರತೀಯ ಬೌಲರ್‌ಗಳು ಆರಂಭದಲ್ಲೇ ಆಘಾತ ನೀಡಿದರು. ಕೇವಲ 35 ರನ್‌ಗಳಿಗೆ ಮೂರು ವಿಕೆಟ್ ಕಳೆದುಕೊಂಡ ಲಂಕಾ ಪಡೆ ಆರಂಭದಲ್ಲೇ ಸಂಕಷ್ಟಕ್ಕೆ ಸಿಲುಕಿತು.

ಈ ಹಂತದಲ್ಲಿ ಕಣಕ್ಕಿಳಿದ ಪಸಿಂದು ಸೂರ್ಯಬಂಡಾರ 80 ರನ್ ಗಳಿಸಿ ತಂಡಕ್ಕೆ ಆಸರೆಯಾದರು. ಬಳಿಕ 7ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿದ ಸೋನಾಲ್ ದಿನುಷಾ ಭರ್ಜರಿ ಶತಕ ಸಿಡಿಸಿ ಶ್ರೀಲಂಕಾ ತಂಡದ ಮೊತ್ತವನ್ನು 250 ರನ್‌ಗಳ ಗಡಿ ದಾಟಿಸಿದರು. 162 ಎಸೆತಗಳನ್ನು ಎದುರಿಸಿದ ದಿನುಷಾ 103 ರನ್‌ಗಳ ಮಹತ್ವದ ಇನಿಂಗ್ಸ್ ಆಡಿದರು.

ಆದರೆ ದಿನುಷಾ ವಿಕೆಟ್ ಪತನದ ಬಳಿಕ ಭಾರತೀಯ ಬೌಲರ್‌ಗಳು ಮತ್ತೆ ಬಿಗಿ ದಾಳಿ ಸಂಘಟಿಸಿದರು. ಸತತವಾಗಿ ವಿಕೆಟ್‌ಗಳನ್ನು ಕಬಳಿಸಿದ ಟೀಂ ಇಂಡಿಯಾ ಬೌಲರ್‌ಗಳು ಶ್ರೀಲಂಕಾ ತಂಡವನ್ನು 290 ರನ್‌ಗಳಿಗೆ ಆಲೌಟ್ ಮಾಡುವಲ್ಲಿ ಯಶಸ್ವಿಯಾದರು.

ಭಾರತದ ಪರ ಪ್ರಸಿದ್ಧ್ ಕೃಷ್ಣ ಹಾಗೂ ಮಾನವ್ ಸುತಾರ್ ತಲಾ ಮೂರು ವಿಕೆಟ್ ಕಬಳಿಸಿ ಮಿಂಚಿದರು. ಸರಾನ್ಶ್ ಜೈನ್ ಎರಡು ವಿಕೆಟ್ ಪಡೆದು ಉತ್ತಮ ಬೌಲಿಂಗ್ ಪ್ರದರ್ಶನ ನೀಡಿದರು.

ಲಂಕಾಗೆ ಫಾಲೋಆನ್

ಮೊದಲ ಇನಿಂಗ್ಸ್‌ನಲ್ಲಿ 213 ರನ್‌ಗಳ ಭರ್ಜರಿ ಮುನ್ನಡೆ ಪಡೆದ ಟೀಂ ಇಂಡಿಯಾ, ಶ್ರೀಲಂಕಾ ತಂಡಕ್ಕೆ ಫಾಲೋಆನ್ ಹೇರಿದೆ. ಇದರೊಂದಿಗೆ ಲಂಕಾ ಪಡೆ ಇದೀಗ ಎರಡನೇ ಇನಿಂಗ್ಸ್ ಆರಂಭಿಸಿದೆ.

ಶ್ರೀಲಂಕಾ ತಂಡವನ್ನು ಎರಡನೇ ಇನಿಂಗ್ಸ್‌ನಲ್ಲಿ 213 ರನ್‌ಗಳ ಒಳಗಾಗಿ ಆಲೌಟ್ ಮಾಡಲು ಭಾರತ ಯಶಸ್ವಿಯಾದರೆ, ಟೀಂ ಇಂಡಿಯಾ ಇನಿಂಗ್ಸ್ ಹಾಗೂ ರನ್‌ಗಳ ಅಂತರದಿಂದ ಭರ್ಜರಿ ಗೆಲುವು ದಾಖಲಿಸಲಿದೆ. ಹೀಗಾಗಿ ಕೊಲಂಬೊ ಟೆಸ್ಟ್‌ನಲ್ಲಿ ಭಾರತ ಇನಿಂಗ್ಸ್ ಗೆಲುವಿನತ್ತ ಮುನ್ನಡೆಯುತ್ತಿದೆ.

ಭಾರತ ಪ್ಲೇಯಿಂಗ್ XI:

ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ದೇವದತ್ ಪಡಿಕ್ಕಲ್, ಶುಭ್‌ಮನ್ ಗಿಲ್ (ನಾಯಕ), ರಿಷಭ್ ಪಂತ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಧ್ರುವ್ ಜುರೆಲ್, ಸರಾನ್ಶ್ ಜೈನ್, ಮಾನವ್ ಸುತಾರ್, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ.

ಶ್ರೀಲಂಕಾ ಪ್ಲೇಯಿಂಗ್ XI:

ಲಹಿರು ಉದಾರ, ಕಮಿಲ್ ಮಿಶ್ರಾ, ಪಸಿಂದು ಸೂರ್ಯಬಂಡಾರ, ಕಮಿಂದು ಮೆಂಡಿಸ್, ಧನಂಜಯ ಡಿ ಸಿಲ್ವಾ (ನಾಯಕ), ಸೋನಾಲ್ ದಿನುಷಾ, ನಿರೋಶನ್ ಡಿಕ್ವೆಲ್ಲಾ (ವಿಕೆಟ್ ಕೀಪರ್), ಕೇಶರ ನುವಾಂತ, ಪ್ರಭಾತ್ ಜಯಸೂರ್ಯ, ಲಹಿರು ಕುಮಾರ, ಅಸಿತ ಫೆರ್ನಾಂಡೊ.

ಅಂಬಾರಿ ರಾಜನಿಗೆ ವಿದಾಯ: 9 ದಸರಾ ಆನೆಗಳೊಂದಿಗೆ ಮೈಸೂರಿನತ್ತ ಗಜಪಯಣ ಆರಂಭ!

0

ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಸಿದ್ಧತೆಗಳಿಗೆ ಭರ್ಜರಿ ಚಾಲನೆ ಸಿಕ್ಕಿದೆ. ನಾಗರಹೊಳೆಯ ವೀರನಹೊಸಹಳ್ಳಿಯಲ್ಲಿ ಸಾಂಪ್ರದಾಯಿಕ ಪೂಜೆಯೊಂದಿಗೆ ಗಜಪಯಣ ಆರಂಭವಾಗಿದ್ದು, ಮೊದಲ ಹಂತದಲ್ಲಿ 9 ದಸರಾ ಆನೆಗಳು ಮೈಸೂರಿನತ್ತ ಹೊರಟಿವೆ.

ವೀರನಹೊಸಹಳ್ಳಿಯಲ್ಲಿ ನಿಗದಿತ ಶುಭ ಮುಹೂರ್ತವಾದ ಬೆಳಗ್ಗೆ 10ರಿಂದ 10:28ರ ತುಲಾ ಲಗ್ನದಲ್ಲಿ ಗಜಪಡೆಗೆ ಪೂಜೆ ನೆರವೇರಿಸಲಾಯಿತು. ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಆನೆಗಳಿಗೆ ಪುಷ್ಪಾರ್ಚನೆ ಸಲ್ಲಿಸಿ ಗಜಪಯಣಕ್ಕೆ ಚಾಲನೆ ನೀಡಿದರು.

ಧನಂಜಯ, ಮಹೇಂದ್ರ, ಏಕಲವ್ಯ, ಪ್ರಶಾಂತ, ಗೋಪಿ, ಶ್ರೀರಾಮ, ಶ್ರೀಕಂಠ ಹಾಗೂ ಹೆಣ್ಣು ಆನೆಗಳಾದ ಲಕ್ಷ್ಮೀ ಮತ್ತು ಕಾವೇರಿ ಸೇರಿದಂತೆ 9 ಆನೆಗಳು ಮೊದಲ ತಂಡದಲ್ಲಿವೆ.

ಗಜಪಡೆ ಎರಡು ದಿನಗಳ ಕಾಲ ಮೈಸೂರು ನಗರದ ಅರಣ್ಯ ಭವನದಲ್ಲಿ ವಾಸ್ತವ್ಯ ಹೂಡಲಿದೆ. ಬಳಿಕ ಆಗಸ್ಟ್ 28ರಂದು ಅರಮನೆ ಆವರಣ ಪ್ರವೇಶಿಸಿ ದಸರಾ ತಾಲೀಮು ಸೇರಿದಂತೆ ಮುಂದಿನ ಸಿದ್ಧತೆಗಳಲ್ಲಿ ಭಾಗಿಯಾಗಲಿದೆ.

25 ವರ್ಷಗಳ ದಸರಾ ಪಯಣಕ್ಕೆ ತೆರೆ

ಈ ಬಾರಿಯ ದಸರಾ ಗಜಪಯಣದಲ್ಲಿ ಅತ್ಯಂತ ಭಾವುಕ ಕ್ಷಣಕ್ಕೂ ಸಾಕ್ಷಿಯಾಯಿತು. ಆರು ಬಾರಿ ಚಿನ್ನದ ಅಂಬಾರಿ ಹೊತ್ತಿರುವ ಅಭಿಮನ್ಯು ಈ ಬಾರಿ ನಿವೃತ್ತಿಯಾಗಿದ್ದು, ಅರಣ್ಯ ಇಲಾಖೆ ವತಿಯಿಂದ ಸಾಂಪ್ರದಾಯಿಕವಾಗಿ ಬೀಳ್ಕೊಡುಗೆ ನೀಡಲಾಯಿತು.

ಸುಮಾರು 25 ವರ್ಷಗಳಿಂದ ದಸರಾ ಮಹೋತ್ಸವದ ಭಾಗವಾಗಿದ್ದ ಅಭಿಮನ್ಯುವಿನ ಸೇವೆಯನ್ನು ಸ್ಮರಿಸಿ ಪೂಜೆ ಸಲ್ಲಿಸಲಾಯಿತು.

ಆದರೆ ದಸರಾ ಸಂದರ್ಭದಲ್ಲಿ ಅಭಿಮನ್ಯುವನ್ನು ನಿಶಾನೆ ಆನೆಯಾಗಿ ಕರೆತರುವ ಸಾಧ್ಯತೆಯನ್ನು ಸಂಪೂರ್ಣವಾಗಿ ತಳ್ಳಿಹಾಕಲಾಗಿಲ್ಲ. ಈ ಕುರಿತು ಇನ್ನೂ ಅಂತಿಮ ತೀರ್ಮಾನವಾಗಿಲ್ಲ. ಮುಂದಿನ ಸಾಧ್ಯತೆಗಳನ್ನು ಪರಿಶೀಲಿಸಿದ ಬಳಿಕ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಚಿವ ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.