Home Blog

ಶಾಲೆ-ಅಂಗನವಾಡಿಗಳಲ್ಲಿ ಇಒ ದಿಢೀರ್ ತಪಾಸಣೆ

0

ವಿಜಯಸಾಕ್ಷಿ ಸುದ್ದಿ, ನರಗುಂದ: ತಾಲೂಕಿನ ಸರ್ಕಾರಿ ಶಾಲೆಗಳಲ್ಲಿ ಶಿಥಿಲಾವಸ್ಥೆಯಲ್ಲಿರುವ ಕೊಠಡಿಗಳ ದುರಸ್ತಿಗೆ ಅಗತ್ಯ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶ್ರೀಧರ್ ಚಿನಗುಂಡಿ ಅವರು ವಿವಿಧ ಶಾಲೆಗಳು ಹಾಗೂ ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ತಾಲೂಕು ಉಸ್ತುವಾರಿ ಕಾರ್ಯದರ್ಶಿ ರಮೇಶ ಕಳಸದ ಅವರ ನೇತೃತ್ವದಲ್ಲಿ ಇತ್ತೀಚೆಗೆ ನಡೆದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಾಲೆಗಳ ಶಿಥಿಲಗೊಂಡ ಕೊಠಡಿಗಳ ದುರಸ್ತಿ ಕುರಿತು ವಿಷಯ ಪ್ರಸ್ತಾಪವಾಗಿತ್ತು. ಇದರ ಹಿನ್ನೆಲೆಯಲ್ಲಿ ಇಒ ಶ್ರೀಧರ್ ಚಿನಗುಂಡಿ ಅವರು ಸುರಕೋಡ, ಹದಲಿ, ರೆಡ್ಡರನಾಗನೂರು ಹಾಗೂ ಶಿರೋಳ ಗ್ರಾಮದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿದರು.

ಮಳೆಗಾಲದ ಸಂದರ್ಭದಲ್ಲಿ ಶಾಲಾ ಮಕ್ಕಳಿಗೆ ಯಾವುದೇ ತೊಂದರೆ ಉಂಟಾಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವ ಕುರಿತು ಶಾಲಾ ಮುಖ್ಯೋಪಾಧ್ಯಾಯರಿಂದ ಮಾಹಿತಿ ಪಡೆದರು. ಶಾಲಾ ಕೊಠಡಿಗಳ ಸುರಕ್ಷತೆ, ವಿದ್ಯಾರ್ಥಿಗಳ ಕಲಿಕಾ ವಾತಾವರಣ ಹಾಗೂ ಮೂಲಸೌಕರ್ಯಗಳ ಬಗ್ಗೆ ಪರಿಶೀಲನೆ ನಡೆಸಿದರು.

ಇದೇ ವೇಳೆ ಶಿಕ್ಷಕರ ಹಾಜರಾತಿ ಪುಸ್ತಕ, ವಿದ್ಯಾರ್ಥಿಗಳ ಹಾಜರಾತಿ ಹಾಗೂ ಚಲನವಲನ ನೋಂದಣಿ (ಮೂವ್‌ಮೆಂಟ್ ರಿಜಿಸ್ಟರ್)ಗಳನ್ನು ಪರಿಶೀಲಿಸಿ, ಶಿಕ್ಷಕರು ದಾಖಲಾತಿಗಳನ್ನು ನಿಯಮಿತವಾಗಿ ನಿರ್ವಹಿಸುವಂತೆ ಸೂಚಿಸಿದರು.

ಶಾಲಾ ಬಿಸಿಯೂಟ ವ್ಯವಸ್ಥೆಯ ಪರಿಶೀಲನೆ ವೇಳೆ ಅಡುಗೆ ಸಿಬ್ಬಂದಿ ನಿರ್ವಹಿಸುವ ನಮೂನೆ-3 ರಿಜಿಸ್ಟರ್ ಪರಿಶೀಲಿಸಲಾಯಿತು. ರೆಡ್ಡರನಾಗನೂರಿನ ಸೀತಮ್ಮ ದೊಡ್ಡನಗೌಡ್ರ ಪ್ರೌಢಶಾಲೆಯಲ್ಲಿ ನಮೂನೆ-3 ರಿಜಿಸ್ಟರ್ ನವೀಕರಿಸದಿರುವುದು ಕಂಡುಬಂದ ಹಿನ್ನೆಲೆಯಲ್ಲಿ ಅಕ್ಷರ ದಾಸೋಹದ ಸಹಾಯಕ ನಿರ್ದೇಶಕರಿಗೆ ಸೂಚನೆ ನೀಡಿ ತಾಲೂಕಿನ ಎಲ್ಲ ಶಾಲೆಗಳಲ್ಲಿ ದಾಖಲೆಗಳನ್ನು ಸಮರ್ಪಕವಾಗಿ ನಿರ್ವಹಿಸುವಂತೆ ಕ್ರಮ ಕೈಗೊಳ್ಳಲು ತಿಳಿಸಿದರು. ಪರಿಶೀಲನೆ ಸಂದರ್ಭದಲ್ಲಿ ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಬಿ.ಇ. ಮೇಯೂಟಿ ಹಾಗೂ ಶಾಲಾ ಸಿಬ್ಬಂದಿ ಉಪಸ್ಥಿತರಿದ್ದರು.

ರಜೆ ಮೇಲಿದ್ದ ಕಾರ್ಯಕರ್ತೆಯ ಸಹಿ ಪತ್ತೆ!

ಹದಲಿ ಗ್ರಾಮದ 122ನೇ ಅಂಗನವಾಡಿ ಕೇಂದ್ರಕ್ಕೆ ತಾಲೂಕು ಪಂಚಾಯಿತಿ ಇಒ ಶ್ರೀಧರ್ ಚಿನಗುಂಡಿ ಭೇಟಿ ನೀಡಿದ ವೇಳೆ ರಜೆ ಮೇಲಿದ್ದ ಕಾರ್ಯಕರ್ತೆಯೊಬ್ಬರು ಹಾಜರಾತಿ ಪುಸ್ತಕದಲ್ಲಿ ಸಹಿ ಮಾಡಿರುವುದು ಬೆಳಕಿಗೆ ಬಂತು. ಈ ಕುರಿತು ಸಿಡಿಪಿಒ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದ ಇಒ ಶ್ರೀಧರ್ ಚಿನಗುಂಡಿ, ಪ್ರಕರಣದ ಕುರಿತು ಸಮಗ್ರ ಪರಿಶೀಲನೆ ನಡೆಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಂಡು ತಾಲೂಕು ಪಂಚಾಯಿತಿಗೆ ವರದಿ ಸಲ್ಲಿಸುವಂತೆ ಸೂಚಿಸಿದರು.

“ಮಳೆಗಾಲದಲ್ಲಿ ಶಾಲಾ ಮಕ್ಕಳ ಸುರಕ್ಷತೆಗೆ ಯಾವುದೇ ರೀತಿಯ ಧಕ್ಕೆಯಾಗದಂತೆ ಶಿಥಿಲಗೊಂಡಿರುವ ಶಾಲಾ ಕೊಠಡಿಗಳ ಕುರಿತು ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಶಿಕ್ಷಣ ಸಂಸ್ಥೆಗಳಲ್ಲಿ ದಾಖಲೆಗಳ ನಿರ್ವಹಣೆಯಲ್ಲೂ ನಿರ್ಲಕ್ಷ್ಯ ಸಹಿಸುವುದಿಲ್ಲ.”

– ಶ್ರೀಧರ್ ಚಿನಗುಂಡಿ, ಕಾರ್ಯನಿರ್ವಾಹಕ ಅಧಿಕಾರಿ, ತಾಲೂಕು ಪಂಚಾಯಿತಿ, ನರಗುಂದ

ಗ್ರಾಮದ ಕೀರ್ತಿ ಹೆಚ್ಚಿಸಿದ ಯುವ ಸಾಧಕರಿಗೆ ಸನ್ಮಾನ

0

ವಿಜಯಸಾಕ್ಷಿ ಸುದ್ದಿ, ನರೇಗಲ್ಲ: ಕ್ರೀಡೆ ಮತ್ತು ದೇಶಸೇವೆಯ ಕ್ಷೇತ್ರದಲ್ಲಿ ಸಾಧನೆ ಮಾಡಿ ಗ್ರಾಮದ ಕೀರ್ತಿಯನ್ನು ಹೆಚ್ಚಿಸಿದ ಯುವ ಪ್ರತಿಭೆಗಳಿಗೆ ಸಮೀಪದ ಜಕ್ಕಲಿ ಗ್ರಾಮದಲ್ಲಿ ಭವ್ಯ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಶ್ರೀ ಸ್ವಾಮಿ ವಿವೇಕಾನಂದ ಯುವಕ ಸಂಘ ಹಾಗೂ ಶ್ರೀ ಮಹಾಂತೇಶ್ವರ ಯುವಕ ಸಂಘಗಳ ಸಂಯುಕ್ತ ಆಶ್ರಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಟ್ಯಾ-ಪಟ್ಯಾ ಕ್ರೀಡೆಯಲ್ಲಿ ಭಾರತ ಮಹಿಳಾ ತಂಡಕ್ಕೆ ಆಯ್ಕೆಯಾಗಿರುವ ಪ್ರೀತಿ ಸುಭಾಷ್ ಬುಳ್ಳಾ ಹಾಗೂ ಅಗ್ನಿವೀರ ಸೇನಾ ಪಡೆಗೆ ಆಯ್ಕೆಯಾಗಿರುವ ಪ್ರಜ್ವಲ್ ಕೋರಿ ಮತ್ತು ಶಂಕ್ರಪ್ಪ ಇಟಗಿ ಅವರನ್ನು ಗ್ರಾಮದ ವೀರಭದ್ರೇಶ್ವರ ದೇವಸ್ಥಾನದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.

ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ರೋಣ ಬಿಜೆಪಿ ಮಂಡಲದ ಮಾಜಿ ಅಧ್ಯಕ್ಷ ಮುತ್ತು ಕಡಗದ ಮಾತನಾಡಿ, ಗ್ರಾಮೀಣ ಪ್ರದೇಶದ ಯುವಕರು ತಮ್ಮ ಪ್ರತಿಭೆ, ಪರಿಶ್ರಮ ಹಾಗೂ ದೃಢ ಸಂಕಲ್ಪದ ಮೂಲಕ ರಾಷ್ಟ್ರೀಯ ಮತ್ತು ದೇಶಸೇವೆಯ ಕ್ಷೇತ್ರಗಳಲ್ಲಿ ಸಾಧನೆ ಮಾಡುತ್ತಿರುವುದು ಹೆಮ್ಮೆಯ ವಿಷಯವಾಗಿದೆ ಎಂದು ಹೇಳಿದರು.

ಪ್ರೀತಿ ಬುಳ್ಳಾ ಅವರು ಅಟ್ಯಾ-ಪಟ್ಯಾ ಕ್ರೀಡೆಯಲ್ಲಿ ಭಾರತ ಮಹಿಳಾ ತಂಡಕ್ಕೆ ಆಯ್ಕೆಯಾಗಿರುವುದು ಗ್ರಾಮದ ಹೆಮ್ಮೆಯನ್ನು ಮತ್ತಷ್ಟು ಹೆಚ್ಚಿಸಿದ್ದು, ಅಂತರರಾಷ್ಟ್ರೀಯ ಮಟ್ಟದಲ್ಲಿ ದೇಶವನ್ನು ಪ್ರತಿನಿಧಿಸುವ ಅವಕಾಶ ದೊರೆತಿರುವುದು ಇತರ ಯುವ ಕ್ರೀಡಾಪಟುಗಳಿಗೆ ಸ್ಫೂರ್ತಿಯಾಗಿದೆ ಎಂದು ತಿಳಿಸಿದರು.

ಅದೇ ರೀತಿ ಅಗ್ನಿವೀರ ಸೇನಾ ಪಡೆಗೆ ಆಯ್ಕೆಯಾಗಿರುವ ಪ್ರಜ್ವಲ್ ಕೋರಿ ಮತ್ತು ಶಂಕ್ರಪ್ಪ ಇಟಗಿ ದೇಶಸೇವೆಯ ಮಹತ್ವದ ಹಾದಿಯಲ್ಲಿ ಹೆಜ್ಜೆ ಇಟ್ಟಿರುವುದು ಯುವ ಸಮುದಾಯಕ್ಕೆ ಮಾದರಿಯಾಗಿದೆ ಎಂದು ಹೇಳಿದರು.

ಇನ್ನೋರ್ವ ಅತಿಥಿ ಪ್ರಕಾಶ ವಾಲಿ ಮಾತನಾಡಿ, ಸ್ಪಷ್ಟ ಗುರಿ, ನಿರಂತರ ಪರಿಶ್ರಮ ಹಾಗೂ ಆತ್ಮವಿಶ್ವಾಸದಿಂದ ಯಾವುದೇ ಕ್ಷೇತ್ರದಲ್ಲಿ ಯಶಸ್ಸು ಸಾಧಿಸಬಹುದು. ಸವಾಲುಗಳನ್ನು ಅವಕಾಶಗಳಾಗಿ ಪರಿವರ್ತಿಸಿಕೊಳ್ಳುವ ಮನೋಭಾವ ಯುವಕರಲ್ಲಿ ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಸನ್ಮಾನ ಸ್ವೀಕರಿಸಿದ ಯುವ ಸಾಧಕರು ಮಾತನಾಡಿ, ತಮ್ಮ ಸಾಧನೆಗೆ ಕುಟುಂಬ ಸದಸ್ಯರು, ಶಿಕ್ಷಕರು ಹಾಗೂ ಗ್ರಾಮಸ್ಥರ ಪ್ರೋತ್ಸಾಹವೇ ಪ್ರಮುಖ ಕಾರಣವಾಗಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಸಾಧನೆ ಮಾಡಿ ಗ್ರಾಮದ ಹೆಸರನ್ನು ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಬೆಳಗಿಸುವ ಸಂಕಲ್ಪ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಚನ್ನಬಸು ಕೊಪ್ಪದ, ಜಗದೀಶ್ ಪಲ್ಲೇದ, ಮಹಾಂತೇಶ್ ಇಟಗಿ, ನಾಗರಾಜ್ ಕಡಗದ, ಅಶೋಕ ವಾಲಿ, ಶರಣಪ್ಪ ಕೋರಿ, ಆದಾಮಸಾಬ್ ಬಾಲೇಸಾಬನವರ, ಮಹಾಂತೇಶ ಆನೆಹೊಸೂರು, ಸುಭಾಷ್ ಬುಳ್ಳಾ, ಗುರುಪಾದ ವಾಲಿ, ಮಂಜು ಪಲ್ಲೇದ, ಪ್ರವೀಣ್ ವಾಲಿ, ಆನಂದ್ ಕೊಪ್ಪದ, ವಿವೇಕಾನಂದ ಗುಬ್ಬೇನಕೊಪ್ಪ, ಕಂಠಯ್ಯ ರೇಣುಕಮಠ, ಅರುಣ ಬೂದಿಹಾಳ, ಶಿವು ಬಳಗೇರ ಸೇರಿದಂತೆ ಗ್ರಾಮಸ್ಥರು, ಯುವಕರು ಹಾಗೂ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಶಿವಕುಮಾರ್ ಸ್ಟಾಂಪಿನ್‌ ಕಾರ್ಯಕ್ರಮ ನಿರೂಪಿಸಿದರು. ನಾಗರಾಜ ಸೋಮನಕಟ್ಟಿ ವಂದಿಸಿದರು.

“ಗ್ರಾಮೀಣ ಭಾಗದ ಯುವಕರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡುತ್ತಿರುವುದು ಹೆಮ್ಮೆಯ ಸಂಗತಿ. ಇಂತಹ ಸಾಧಕರು ಮುಂದಿನ ಪೀಳಿಗೆಗೆ ಪ್ರೇರಣೆಯಾಗಬೇಕು.”

– ಮುತ್ತು ಕಡಗದ, ಮಾಜಿ ಅಧ್ಯಕ್ಷರು, ಬಿಜೆಪಿ ಮಂಡಲ, ರೋಣ

ವಿದ್ಯಾರ್ಥಿಗಳ ಅನುಕೂಲಕ್ಕೆ ಕಾಲೇಜಿಗೆ ಬೆಂಚ್‌ಗಳ ದೇಣಿಗೆ

0

ವಿಜಯಸಾಕ್ಷಿ ಸುದ್ದಿ, ಹಗರಿಬೊಮ್ಮನಹಳ್ಳಿ: ಪಟ್ಟಣದ ರಾಮನಗರದಲ್ಲಿರುವ ಗಂಗಾವತಿ ಭೀಮಪ್ಪನವರ ಪದವಿ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.

ಈ ಸಂದರ್ಭದಲ್ಲಿ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಸ್ವಾಮಿ ವಿವೇಕಾನಂದ ಸಂಘ (ರಿ) ವತಿಯಿಂದ ಕಾಲೇಜಿಗೆ ಬೆಂಚ್‌ಗಳನ್ನು ಕೊಡುಗೆಯಾಗಿ ನೀಡಲಾಯಿತು. ಸಂಘದ ಈ ಸಮಾಜಮುಖಿ ಕಾರ್ಯವನ್ನು ಕಾಲೇಜು ಆಡಳಿತ ಮಂಡಳಿ ಶ್ಲಾಘಿಸಿ ಅಭಿನಂದನೆ ಸಲ್ಲಿಸಿತು.

ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷ ಮ್ಯಾದರ ರಾಮಣ್ಣ, ಬಿಜೆಪಿ ಮುಖಂಡ ಬಲ್ಲಾಹುಣಿಸಿ ರಾಮಣ್ಣ, ಸಮಾಜಸೇವಕರಾದ ಬಸವರಾಜ್ ರೆಡ್ಡಿ, ಜಾಂಗೀರ್, ರಾಮದೇವ್, ಸಂಚಿ ಶಿವಕುಮಾರ್, ರಮೇಶ್, ನಾಗಣ್ಣ, ದೊಡ್ಡ ವೀರಪ್ಪ, ಗೋವಿಂದ, ನಂದಿ ಶಿವಕುಮಾರ್, ಪ್ರಕಾಶ್, ಶೇಖರ್, ರವಿ, ಅಸ್ಲಾಂ, ಮಂಜು, ಕೊಟ್ರೇಶ್, ಹನುಮಂತ, ನಾಗರಾಜ, ಕಾಲೇಜಿನ ಅಧೀಕ್ಷಕ ಸುರೇಶ್, ಬೆರಳಚ್ಚುಗಾರ ಸಿ.ಎಂ. ಶ್ರೀನಿವಾಸ ಹಾಗೂ ಮಡಿವಾಳರ ಪ್ರಕಾಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಕಾರ್ಯಕ್ರಮ ಯಶಸ್ವಿಯಾಗಿ ಜರುಗಿತು.

ಮಾರನಬಸರಿಯಲ್ಲಿ ಮೊಹರಂ ವೈಭವ ಜೋರು

0

ವಿಜಯಸಾಕ್ಷಿ ಸುದ್ದಿ, ರೋಣ: ಐತಿಹಾಸಿಕ ಮೊಹರಂ ಹಬ್ಬದ ಸಂಭ್ರಮದಲ್ಲಿ ತೇಲುತ್ತಿರುವ ರೋಣ ತಾಲೂಕಿನ ಮಾರನಬಸರಿ ಗ್ರಾಮ ಇದೀಗ ಅಲಂಕಾರಿಕ ವಿದ್ಯುತ್ ದೀಪಗಳ ಝಗಮಗಿಕೆಯಿಂದ ಕಂಗೊಳಿಸುತ್ತಿದ್ದು, ಸಂಧಲ್ ರಾತ್ರಿಗೆ ಕ್ಷಣಗಣನೆ ಆರಂಭವಾಗಿದೆ.

ಗ್ರಾಮದ ಪ್ರಮುಖ ಬೀದಿಗಳು, ಸಣ್ಣ ಹಾಗೂ ದೊಡ್ಡ ಮಸೀದಿಗಳು ಸೇರಿದಂತೆ ವಿವಿಧ ಸ್ಥಳಗಳನ್ನು ಆಕರ್ಷಕ ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿದ್ದು, ರಾತ್ರಿ ವೇಳೆಯಲ್ಲಿ ಗ್ರಾಮವೇ ವರ್ಣರಂಜಿತವಾಗಿ ಕಂಗೊಳಿಸುತ್ತಿದೆ. ಈ ಬಾರಿ ವಿಶೇಷವಾಗಿ ಗ್ರಾಮದ ಮಹಾಧ್ವಾರವನ್ನು ಭವ್ಯವಾಗಿ ಸಜ್ಜುಗೊಳಿಸಲಾಗಿದ್ದು, ಮಹಾಧ್ವಾರದ ಮೇಲ್ಭಾಗದಲ್ಲಿ ಎರಡು ಬಸವಣ್ಣಗಳ ಮಧ್ಯೆ ಇಷ್ಟಲಿಂಗದ ಆಕೃತಿ ಅಳವಡಿಸಿರುವುದು ಭಕ್ತರ ಹಾಗೂ ಸಾರ್ವಜನಿಕರ ಗಮನ ಸೆಳೆಯುತ್ತಿದೆ.

ಜೂನ್ 24ರಂದು ನಡೆಯಲಿರುವ ಸಂಧಲ್ ರಾತ್ರಿಗೆ ಈಗಾಗಲೇ ಸಾವಿರಾರು ಭಕ್ತರು ಗ್ರಾಮಕ್ಕೆ ಆಗಮಿಸುತ್ತಿದ್ದಾರೆ. ಹಬ್ಬದ ಅಂಗವಾಗಿ ಎರಡು ಮಸೀದಿಗಳಲ್ಲೂ ವಿಶೇಷ ಸಿದ್ಧತೆಗಳು ನಡೆದಿದ್ದು, ಮೊಹರಂ ಸಂಪ್ರದಾಯದ ಅಳ್ಳೊಳ್ಳಿ ಬವ್ವ, ಹುಲಿಕುಣಿತ ಸೇರಿದಂತೆ ವಿವಿಧ ಸಾಂಪ್ರದಾಯಿಕ ಆಚರಣೆಗಳು ಗ್ರಾಮದಲ್ಲಿ ವಿಶೇಷ ಮೆರುಗು ತಂದಿವೆ.

ಸಣ್ಣ ಹಾಗೂ ದೊಡ್ಡ ಮಸೀದಿ ಆವರಣದಲ್ಲಿ ಸುಮಾರು 50 ಅಡಿ ಎತ್ತರದ ವಿದ್ಯುತ್ ದೀಪಾಲಂಕೃತ ಧ್ವಜಸ್ತಂಭಗಳನ್ನು ನಿರ್ಮಿಸಲಾಗಿದ್ದು, ಅವುಗಳು ಹಬ್ಬದ ವೈಭವವನ್ನು ಮತ್ತಷ್ಟು ಹೆಚ್ಚಿಸಿವೆ. ಅಲ್ಲದೆ, ಸಣ್ಣ ಮಸೀದಿಯಿಂದ ರಾಜಕೀಯ ಭವಿಷ್ಯ ನುಡಿಯುವ ಧ್ವಜಸ್ತಂಭದವರೆಗೆ ಆಕರ್ಷಕ ಬೆಳಕಿನ ವಿನ್ಯಾಸ ಮಾಡಲಾಗಿದೆ.

ಬುಧವಾರದ ಸಂಧಲ್ ರಾತ್ರಿಯಲ್ಲಿ ಪ್ರಸಕ್ತ ವರ್ಷ ಯಾವ ಬೀಜ ಬಿತ್ತನೆ ಮಾಡಿದರೆ ಉತ್ತಮ ಫಸಲು ದೊರೆಯಲಿದೆ ಎಂಬುದರ ಕುರಿತು ಧಾರ್ಮಿಕ ವಿಧಿವಿಧಾನಗಳು ನಡೆಯಲಿದ್ದು, ದೊಡ್ಡ ಮಸೀದಿ ದೇವರ ಸವಾರಿ ಹಾಗೂ ಗೀಗಿ ಪದಗಳ ಮೇಳದ ಕಲಾವಿದರ ಪ್ರದರ್ಶನವೂ ಜರುಗಲಿದೆ.

ಒಟ್ಟಾರೆ, ಬೆಳಕಿನ ಅಲಂಕಾರದಲ್ಲಿ ಮಿಂದೇಳುತ್ತಿರುವ ಭಾವೈಕ್ಯತೆಯ ಮಾರನಬಸರಿ ಗ್ರಾಮವು ಹಬ್ಬದ ವೈಭವದಿಂದ ಸುತ್ತಮುತ್ತಲಿನ ಜನರನ್ನು ತನ್ನತ್ತ ಸೆಳೆಯುತ್ತಿದೆ.

ಎಚ್‌ಕೆಪಿಗೆ ಸಚಿವ ಸ್ಥಾನಕ್ಕಾಗಿ ಪ್ರಾರ್ಥನೆ

0

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರ ನೇತೃತ್ವದ ಮಂತ್ರಿಮಂಡಲದಲ್ಲಿ ಮಾಜಿ ಸಚಿವ ಎಚ್.ಕೆ. ಪಾಟೀಲ ಅವರಿಗೆ ಸಚಿವ ಸ್ಥಾನ ದೊರಕಲಿ ಎಂದು ಆಶಿಸಿ ಪಟ್ಟಣದ ಐತಿಹಾಸಿಕ ಶ್ರೀ ಸೋಮೇಶ್ವರ ದೇವಸ್ಥಾನದಲ್ಲಿ ಮಂಗಳವಾರ ವಿಶೇಷ ಪೂಜೆ ಸಲ್ಲಿಸಲಾಯಿತು.

ಸೋಮೇಶ್ವರನಿಗೆ ಅಭಿಷೇಕ ಹಾಗೂ ವಿಶೇಷ ಪೂಜೆ ನೆರವೇರಿಸಿ ಭಕ್ತರಿಗೆ ಪ್ರಸಾದ ವಿತರಿಸಲಾಯಿತು. ಈ ವೇಳೆ ಮಾತನಾಡಿದ ಹಿರಿಯ ಮುಖಂಡ ಚನ್ನಪ್ಪ ಜಗಲಿ, ಎಚ್.ಕೆ. ಪಾಟೀಲ ಅವರು ಗದಗ ಜಿಲ್ಲೆಯ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಿರುವ ಅನುಭವಿ ಹಾಗೂ ಕಳಂಕರಹಿತ ರಾಜಕಾರಣಿಯಾಗಿದ್ದಾರೆ ಎಂದು ಹೇಳಿದರು.

ಪ್ರವಾಸೋದ್ಯಮ ಸಚಿವರಾಗಿದ್ದ ಅವಧಿಯಲ್ಲಿ ಲಕ್ಷ್ಮೇಶ್ವರದ ಐತಿಹಾಸಿಕ ಶ್ರೀ ಸೋಮೇಶ್ವರ ದೇವಸ್ಥಾನದ ಉತ್ತರ ಮಹಾದ್ವಾರದ ಮರುನಿರ್ಮಾಣಕ್ಕೆ ₹2.50 ಕೋಟಿ ಅನುದಾನ ಒದಗಿಸಿ ದೇವಸ್ಥಾನದ ಅಭಿವೃದ್ಧಿಗೆ ನೆರವಾಗಿದ್ದರು. ಅವರ ಅನುಭವ ಮತ್ತು ಸೇವೆಯನ್ನು ಪರಿಗಣಿಸಿ ಸಚಿವ ಸಂಪುಟದಲ್ಲಿ ಅವಕಾಶ ನೀಡಬೇಕು ಎಂಬ ಆಶಯದಿಂದ ವಿಶೇಷ ಪೂಜೆ ಸಲ್ಲಿಸಲಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಶ್ರೀ ಸೋಮೇಶ್ವರ ಭಕ್ತರ ಸೇವಾ ಟ್ರಸ್ಟ್ ಅಧ್ಯಕ್ಷ ಗುರುರಾಜ ಪಾಟೀಲಕುಲಕರ್ಣಿ, ಸುರೇಶ ರಾಚನಾಯ್ಕರ, ವಿರುಪಾಕ್ಷ ಆದಿ, ಬಸವರಾಜ ಮೆಣಸಿನಕಾಯಿ, ಮಯೂರಗೌಡ ಪಾಟೀಲ, ಬಂಗಾರೆಪ್ಪ ಮುಳಗುಂದ, ಡಿ.ವಿ. ಹಿರೇಮಠ, ನಂದೀಶ ಬಂಡಿವಾಡ, ಕಾಶಪ್ಪ ಉಮಚಗಿ, ಯಲ್ಲಪ್ಪಗೌಡ ಪಾಟೀಲ, ಬಸಣ್ಣ ಉಮಚಗಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ವಿದ್ಯುತ್ ಖಾಸಗೀಕರಣಕ್ಕೆ ರೈತರ ತೀವ್ರ ವಿರೋಧ

0

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ರಾಜ್ಯದಲ್ಲಿ ವಿದ್ಯುತ್ ವಿತರಣೆಯನ್ನು ಖಾಸಗಿ ಕಂಪನಿಗಳಿಗೆ ವಹಿಸಬಾರದು ಹಾಗೂ ಟಾಟಾ ಕಂಪನಿಗೆ ವಿದ್ಯುತ್ ವಿತರಣಾ ಪರವಾನಿಗೆ ನೀಡಬಾರದು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಲಕ್ಷ್ಮೇಶ್ವರ ತಾಲೂಕು ಘಟಕದ ಕಾರ್ಯಕರ್ತರು ಮಂಗಳವಾರ ತಹಸೀಲ್ದಾರ್ ಎಂ. ಧನಂಜಯ ಅವರಿಗೆ ಮನವಿ ಸಲ್ಲಿಸಿದರು.

ವಿದ್ಯುತ್ ವಿತರಣಾ ಕ್ಷೇತ್ರಕ್ಕೆ ಖಾಸಗಿ ಕಂಪನಿಗಳು ಪ್ರವೇಶಿಸಿದರೆ ರೈತರ ಪಂಪ್‌ಸೆಟ್‌ಗಳಿಗೆ ಹಾಗೂ ಗೃಹ ಬಳಕೆದಾರರಿಗೆ ತೊಂದರೆಯಾಗಲಿದೆ. ಜೊತೆಗೆ ನಿರುದ್ಯೋಗ ಸಮಸ್ಯೆಯೂ ಹೆಚ್ಚಾಗುವ ಸಾಧ್ಯತೆ ಇದೆ. ಆದ್ದರಿಂದ ವಿದ್ಯುತ್ ಇಲಾಖೆಯನ್ನು ಖಾಸಗಿಯವರಿಗೆ ವಹಿಸಲು ಯಾವುದೇ ಪರವಾನಿಗೆ ನೀಡಬಾರದು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ಈಗಾಗಲೇ ಕೆಲವು ರಾಜ್ಯಗಳಲ್ಲಿ ಖಾಸಗಿ ಕಂಪನಿಗಳು ವಿದ್ಯುತ್ ಕ್ಷೇತ್ರಕ್ಕೆ ಪ್ರವೇಶಿಸಿದ ಪರಿಣಾಮ ರೈತರು ಹಾಗೂ ಸಾಮಾನ್ಯ ಗ್ರಾಹಕರು ಸಂಕಷ್ಟ ಅನುಭವಿಸುತ್ತಿದ್ದಾರೆ. ಹೆಸ್ಕಾಂನ ಆರ್ಥಿಕ ಸ್ಥಿರತೆ, ವಿದ್ಯುತ್ ಕಾರ್ಮಿಕರ ಹಿತಾಸಕ್ತಿ ಹಾಗೂ ಗ್ರಾಮೀಣ ಗ್ರಾಹಕರ, ವಿಶೇಷವಾಗಿ ರೈತರ ಹಿತದೃಷ್ಟಿಯಿಂದ ಖಾಸಗಿ ವಿತರಣಾ ಪರವಾನಗಿ ಅರ್ಜಿಯನ್ನು ತಿರಸ್ಕರಿಸಬೇಕು ಎಂದು ಆಗ್ರಹಿಸಲಾಯಿತು.

ಒಂದು ವೇಳೆ ವಿದ್ಯುತ್ ಖಾಸಗೀಕರಣಕ್ಕೆ ಮುಂದಾದರೆ ರಾಜ್ಯಾದ್ಯಂತ ಬಂದ್ ಹಾಗೂ ಬಾರಕೋಲು ಚಳವಳಿ ನಡೆಸಲಾಗುವುದು ಎಂದು ರೈತ ಮುಖಂಡರು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ರಾಜ್ಯ ರೈತ ಸಂಘದ ತಾಲೂಕು ಘಟಕದ ಅಧ್ಯಕ್ಷ ನಾಗರಾಜ ಕಳ್ಳಿಹಾಳ, ಮಂಜುನಾಥ ಅಣ್ಣಿಗೇರಿ ಸೇರಿದಂತೆ ರಾಮಣ್ಣ ಕಾಶಿಕೋವಿ, ಶಿವಾನಂದ ಲಿಂಗಶೆಟ್ಟಿ, ಮಂಜುನಾಥ ಹಾವಳಕೇರಿ, ಮುರುಗೇಶ ಬಳಿಗಾರ, ಶಂಭಣ್ಣ ಬಳಿಗಾರ, ಸಿದ್ಧಲಿಂಗಪ್ಪ ಕಳ್ಳಿಹಾಳ, ಪ್ರಕಾಶ ಬಡಿಗೇರ, ಖಾದರ್‌ಸಾಬ್ ರಿತ್ತಿ, ಶಿವಪ್ಪ ಶಿವಸಿಂಪಿಗೇರ, ದಲಾವರ್‌ಸಾಬ್ ತಬ್ಬಲ, ಫಕ್ಕೀರೇಶ ಶೀರನಹಳ್ಳಿ, ಕುಮಾರ ಕರಡಿಕೊಪ್ಪ ಹಾಗೂ ರಮೇಶ ಕಾಶಿಕೋವಿ ಉಪಸ್ಥಿತರಿದ್ದರು.

ರಾಜ್ಯದಲ್ಲಿ ಕೃಷಿ ಇಲಾಖೆ ಸತ್ತಂತಾಗಿದೆ: ಬಸವರಾಜ ಬೊಮ್ಮಾಯಿ

0

ವಿಜಯಸಾಕ್ಷಿ ಸುದ್ದಿ, ಗದಗ: ರಾಜ್ಯದಲ್ಲಿ ಮಳೆ ಕೊರತೆಯಿಂದ ಬರಗಾಲದ ಛಾಯೆ ಆವರಿಸಿದ್ದು, ಸರ್ಕಾರ ತಕ್ಷಣ ಸಮೀಕ್ಷೆ ನಡೆಸಿ ರಾಜ್ಯವನ್ನು ಬರಪೀಡಿತ ಪ್ರದೇಶವೆಂದು ಘೋಷಿಸಬೇಕು ಎಂದು ಸಂಸದ ಬಸವರಾಜ ಬೊಮ್ಮಾಯಿ ಆಗ್ರಹಿಸಿದರು.

ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕೃಷಿ ಸಚಿವರೇ ಇಲ್ಲದಂತಾಗಿದ್ದು, ಕೃಷಿ ಇಲಾಖೆ ಏನು ಮಾಡುತ್ತಿದೆ ಎಂಬುದೇ ಗೊತ್ತಾಗುತ್ತಿಲ್ಲ. ಪರ್ಯಾಯ ಬೆಳೆ ಬೆಳೆಯಿರಿ, ಅಲ್ಪಾವಧಿ ಬೆಳೆ ಬೆಳೆಸಿರಿ ಎಂಬ ಸಲಹೆಗಳು ಹೊಸದೇನಲ್ಲ. ರೈತರ ಸಮಸ್ಯೆಗಳಿಗೆ ಸ್ಪಂದಿಸದ ಇಲಾಖೆ ರೈತರ ಪಾಲಿಗೆ ಸತ್ತಂತಾಗಿದೆ ಎಂದು ಟೀಕಿಸಿದರು.

ಬರಗಾಲ ಘೋಷಿಸಿದ ಬಳಿಕ ಕೇಂದ್ರ ಸರ್ಕಾರ ಅಗತ್ಯ ಅನುದಾನ ಒದಗಿಸಲಿದೆ. ಆದರೆ ರಾಜ್ಯ ಸರ್ಕಾರ ಈ ನಿಟ್ಟಿನಲ್ಲಿ ಯಾವುದೇ ಗಂಭೀರ ಪ್ರಯತ್ನ ನಡೆಸಿಲ್ಲ ಎಂದು ಆರೋಪಿಸಿದರು.

ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳು ನಡೆಸಿದ ಪ್ರತಿಭಟನೆಯಿಂದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಯುವಕರ ಬಗ್ಗೆ ಭಯ ಉಂಟಾಗಿದೆ. ಉದ್ಯೋಗ ಸೃಷ್ಟಿಸುವ ಬದಲು ಯುವಕರಿಗೆ ಆಮಿಷವೊಡ್ಡಿ ರಾಜಕೀಯವಾಗಿ ಬಳಸಿಕೊಳ್ಳಲಾಗುತ್ತಿದೆ ಎಂದು ವಾಗ್ದಾಳಿ ನಡೆಸಿದರು.

ಕೇಂದ್ರ ಸರ್ಕಾರದ ನ್ಯಾಷನಲ್ ಕ್ಯಾರಿಯರ್ ಸರ್ವಿಸ್ ಪೋರ್ಟಲ್ ಮೂಲಕ ಉದ್ಯೋಗಾಕಾಂಕ್ಷಿಗಳು ಹಾಗೂ ಉದ್ಯೋಗದಾತರ ನಡುವೆ ನೇರ ಸಂಪರ್ಕ ಕಲ್ಪಿಸಲಾಗಿದ್ದು, ಕೋಟ್ಯಂತರ ಜನರಿಗೆ ಅನುಕೂಲವಾಗಿದೆ. ಇದೇ ಮಾದರಿಯ ಯೋಜನೆಯನ್ನು ಹೊಸ ಹೆಸರಿನಲ್ಲಿ ಘೋಷಿಸಿ ಜನರನ್ನು ದಾರಿ ತಪ್ಪಿಸುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿದರು.

ಎಂಜಿಎನ್‌ಆರ್‌ಇಜಿಎಸ್ ಯೋಜನೆಯಡಿ ಕೇಂದ್ರ ಸರ್ಕಾರ 100 ದಿನಗಳ ಉದ್ಯೋಗಕ್ಕೆ ಅನುದಾನ ನೀಡುತ್ತಿದ್ದು, ಉಳಿದ 25 ದಿನಗಳಿಗೆ ಮಾತ್ರ ರಾಜ್ಯ ಸರ್ಕಾರ ಹಣ ಒದಗಿಸಬೇಕಿದೆ. ಹಲವು ರಾಜ್ಯಗಳು ಈ ಯೋಜನೆಯನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ರೈತರ ಹಿತದೃಷ್ಟಿಯಿಂದ ಕರ್ನಾಟಕದಲ್ಲೂ ತಕ್ಷಣ ಅನುಷ್ಠಾನಗೊಳಿಸಬೇಕು ಎಂದು ಒತ್ತಾಯಿಸಿದರು.

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರತಿಷ್ಠೆ ಬಿಟ್ಟು ನಡೆದುಕೊಳ್ಳಬೇಕು. ರೈತರಿಗೆ ತೊಂದರೆಯಾಗದಂತೆ ಲಭ್ಯವಿರುವ ಸರ್ಕಾರಿ ಜಮೀನಿನಲ್ಲಿ ಟೌನ್‌ಶಿಪ್ ನಿರ್ಮಾಣ ಮಾಡಬೇಕು ಎಂದು ಸಲಹೆ ನೀಡಿದರು.

“ರಾಜ್ಯದಲ್ಲಿ ಕೃಷಿ ಸಚಿವರಿಲ್ಲ, ಕೃಷಿ ಇಲಾಖೆ ಏನು ಮಾಡುತ್ತಿದೆ ಎಂಬುದೇ ಗೊತ್ತಿಲ್ಲ. ಒಟ್ಟಾರೆ ರೈತರ ಪಾಲಿಗೆ ಇಲಾಖೆ ಸತ್ತಂತಾಗಿದೆ.”

– ಬಸವರಾಜ ಬೊಮ್ಮಾಯಿ, ಸಂಸದ

ಶೀಘ್ರದಲ್ಲೇ ಕಾಂಗ್ರೆಸ್ ಜಿಲ್ಲಾಧ್ಯಕ್ಷರ ನೇಮಕ: ಹೊರರಾಜ್ಯದ ವೀಕ್ಷಕರಿಂದ ಆಯ್ಕೆ ಪ್ರಕ್ರಿಯೆ ಎಂದ ಬಿ.ಕೆ. ಹರಿಪ್ರಸಾದ್

ಮಂಗಳೂರು: ರಾಜ್ಯ ಕಾಂಗ್ರೆಸ್ ಸಂಘಟನೆಯನ್ನು ಬಲಪಡಿಸುವ ಉದ್ದೇಶದಿಂದ ಜಿಲ್ಲಾಧ್ಯಕ್ಷರ ನೇಮಕಾತಿ ಪ್ರಕ್ರಿಯೆಯಲ್ಲಿ ಮಹತ್ವದ ಬದಲಾವಣೆ ತರಲಾಗಿದ್ದು, ಇನ್ನು ಮುಂದೆ ಬೇರೆ ರಾಜ್ಯಗಳಿಂದ ಆಗಮಿಸುವ ವೀಕ್ಷಕರು ಜಿಲ್ಲೆಯಲ್ಲೇ ಒಂದು ವಾರ ತಂಗಿ ಕಾರ್ಯಕರ್ತರು ಹಾಗೂ ಮುಖಂಡರ ಅಭಿಪ್ರಾಯ ಸಂಗ್ರಹಿಸಿದ ಬಳಿಕ ಎಐಸಿಸಿಗೆ ಹೆಸರುಗಳನ್ನು ಶಿಫಾರಸು ಮಾಡಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ತಿಳಿಸಿದ್ದಾರೆ.

ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆ ಕೆಪಿಸಿಸಿ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರು ಜಿಲ್ಲಾಧ್ಯಕ್ಷರ ಹೆಸರನ್ನು ಎಐಸಿಸಿಗೆ ಶಿಫಾರಸು ಮಾಡುತ್ತಿದ್ದರು. ಆದರೆ, ಇದೀಗ ಎಐಸಿಸಿ ಜಾರಿಗೆ ತಂದಿರುವ “ಸಂಘಟನ್ ಸರ್ಜನ್ ಅಭಿಯಾನ್” ಅಡಿಯಲ್ಲಿ ಹೊಸ ವಿಧಾನ ಅನುಸರಿಸಲಾಗುತ್ತಿದೆ ಎಂದು ಹೇಳಿದರು.

ಅದರಂತೆ, ಬೇರೆ ರಾಜ್ಯಗಳ ವೀಕ್ಷಕರು ಜಿಲ್ಲೆಗೆ ಭೇಟಿ ನೀಡಿ ಕನಿಷ್ಠ ಏಳು ದಿನಗಳ ಕಾಲ ಬ್ಲಾಕ್ ಕಾಂಗ್ರೆಸ್ ಸಮಿತಿಗಳ ಸಭೆ ನಡೆಸಲಿದ್ದಾರೆ. ಈ ವೇಳೆ ಕಾರ್ಯಕರ್ತರು ಹಾಗೂ ಮುಖಂಡರ ಅಭಿಪ್ರಾಯವನ್ನು ಸಂಗ್ರಹಿಸಿ, ಕನಿಷ್ಠ ಇಬ್ಬರಿಂದ ಗರಿಷ್ಠ ಆರು ಅಭ್ಯರ್ಥಿಗಳ ಹೆಸರನ್ನು ಎಐಸಿಸಿಗೆ ಶಿಫಾರಸು ಮಾಡಲಿದ್ದಾರೆ. ಆ ಪಟ್ಟಿಯ ಆಧಾರದ ಮೇಲೆ ಅಂತಿಮವಾಗಿ ಜಿಲ್ಲಾಧ್ಯಕ್ಷರನ್ನು ನೇಮಕ ಮಾಡಲಾಗುತ್ತದೆ ಎಂದು ವಿವರಿಸಿದರು.

ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಕುರಿತು ಚುನಾವಣಾ ಆಯೋಗದ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಲಾಗಿದೆ ಎಂದು ತಿಳಿಸಿದ ಹರಿಪ್ರಸಾದ್, ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ನೈಜ ಮತದಾರರನ್ನು ಮತ್ತೆ ದಾಖಲಿಸಲು ವಿಶೇಷ ಅಭಿಯಾನ ಹಮ್ಮಿಕೊಳ್ಳುವಂತೆ ಒತ್ತಾಯಿಸಲಾಗಿದೆ ಎಂದರು.

ನೈಜ ಮತದಾರರನ್ನು ಮತದಾನದ ಹಕ್ಕಿನಿಂದ ವಂಚಿಸುವ ಪ್ರಯತ್ನ ನಡೆಯುತ್ತಿರುವಂತೆ ಕಾಣುತ್ತಿದೆ. ಚುನಾವಣಾ ಆಯೋಗ ಬಿಜೆಪಿ ಪರವಾಗಿ ಕಾರ್ಯನಿರ್ವಹಿಸುತ್ತಿರುವ ಭಾವನೆ ಮೂಡಿದೆ. ಯಾವುದೇ ನೈಜ ಮತದಾರರು ತಮ್ಮ ಮತದಾನದ ಹಕ್ಕು ಕಳೆದುಕೊಳ್ಳದಂತೆ ಕಾಂಗ್ರೆಸ್ ಹೋರಾಟ ಮುಂದುವರಿಸಲಿದೆ ಎಂದು  ಹೇಳಿದರು.

ಕಾರವಾರ-ಬಳ್ಳಾರಿಯಲ್ಲಿ ಏಕಕಾಲಕ್ಕೆ ದಾಳಿ: ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಇಬ್ಬರು ಅಧಿಕಾರಿಗಳು

ಕಾರವಾರ: ರಾಜ್ಯದಲ್ಲಿ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಪೊಲೀಸರು ಕಾರ್ಯಾಚರಣೆಯನ್ನು ಮತ್ತಷ್ಟು ತೀವ್ರಗೊಳಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡಿನಲ್ಲಿ ಲಂಚ ಸ್ವೀಕರಿಸುತ್ತಿದ್ದ ಇಬ್ಬರು ಸರ್ಕಾರಿ ಅಧಿಕಾರಿಗಳನ್ನು ರೆಡ್‌ಹ್ಯಾಂಡ್‌ ಆಗಿ ಬಂಧಿಸಿರುವ ಲೋಕಾಯುಕ್ತ,

ಮತ್ತೊಂದೆಡೆ ಬಳ್ಳಾರಿಯಲ್ಲಿ ಆದಾಯಕ್ಕೂ ಮೀರಿದ ಆಸ್ತಿ ಗಳಿಕೆ ಆರೋಪದಡಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ (ಆರ್‌ಡಿಪಿಆರ್) ಇಲಾಖೆಯ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಮನೆ ಹಾಗೂ ಕಚೇರಿಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿ ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿಯನ್ನು ಪತ್ತೆಹಚ್ಚಿದೆ.

ಕಾರವಾರ ಲೋಕಾಯುಕ್ತ ಎಸ್‌ಪಿ ಕುಮಾರಚಂದ್ರ ಅವರ ನೇತೃತ್ವದಲ್ಲಿ ಧಾರವಾಡ ಹಾಗೂ ಕಾರವಾರ ಡಿವೈಎಸ್‌ಪಿಗಳ ಜಂಟಿ ತಂಡ ಮುಂಡಗೋಡಿನ ಎರಡು ಸರ್ಕಾರಿ ಕಚೇರಿಗಳ ಮೇಲೆ ದಾಳಿ ನಡೆಸಿತು.

ಹೆಸ್ಕಾಂ ಇಂಜಿನಿಯರ್ ಧರ್ಮರಾಜ್ ಬೆಡಸಗಾಂವ್ ಗುತ್ತಿಗೆದಾರ ಶಿವಯೋಗಿ ಕೂಡಲಮಠ ಅವರಿಂದ ₹65 ಸಾವಿರ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಅವರನ್ನು ರೆಡ್‌ಹ್ಯಾಂಡ್‌ ಆಗಿ ಬಂಧಿಸಿದರು.

ಇನ್ನೊಂದು ಪ್ರಕರಣದಲ್ಲಿ, ಫಾರ್ಮ್‌ಹೌಸ್‌ಗೆ ಪರವಾನಗಿ ನೀಡಲು ₹15 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಕಂದಾಯ ನಿರೀಕ್ಷಕ ಬಸವರಾಜ್ ಬಿಸ್ನಾಳ ಹಣ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ.

ಬಳ್ಳಾರಿ ಲೋಕಾಯುಕ್ತ ಎಸ್‌ಪಿ ವಾಸುದೇವರಾಮ್ ನೇತೃತ್ವದಲ್ಲಿ ಸಿರುಗುಪ್ಪ ತಾಲೂಕಿನ ಆರ್‌ಡಿಪಿಆರ್ ಇಲಾಖೆಯ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ವ್ಯಾಸಗಾರ ತಿಪ್ಪೇಸ್ವಾಮಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಭ್ರಷ್ಟಾಚಾರ ನಿರೋಧಕ ಕಾಯ್ದೆಯಡಿ ಬೆಳ್ಳಂಬೆಳಗ್ಗೆ ದಾಳಿ ನಡೆಸಲಾಯಿತು.

ಬಳ್ಳಾರಿಯ ಹನುಮಾನ್ ನಗರ ಹಾಗೂ ಕುಡಿತಿನಿಯಲ್ಲಿರುವ ನಿವಾಸಗಳಲ್ಲಿ ದಾಖಲೆಗಳ ಪರಿಶೀಲನೆ ನಡೆಸಿದ ಅಧಿಕಾರಿಗಳು, ಸುಮಾರು 300 ಗ್ರಾಂ ಚಿನ್ನ, 800 ಗ್ರಾಂ ಬೆಳ್ಳಿ ಆಭರಣ, 6 ನಿವೇಶನಗಳಿಗೆ ಸಂಬಂಧಿಸಿದ ದಾಖಲೆಗಳು, ₹1 ಲಕ್ಷ ನಗದು ಪತ್ತೆಹಚ್ಚಿದರು. ಜೊತೆಗೆ ಬ್ಯಾಂಕ್ ಖಾತೆಯಲ್ಲಿದ್ದ ₹5 ಲಕ್ಷವನ್ನು ಫ್ರೀಜ್ ಮಾಡಲಾಗಿದೆ.

ಮನೆಗಳ ಮೇಲಿನ ದಾಳಿಯ ಬಳಿಕ ಸಿರುಗುಪ್ಪ ನಗರದ ಆರ್‌ಡಿಪಿಆರ್ ಕಚೇರಿಯ ಮೇಲೂ ಲೋಕಾಯುಕ್ತ ತಂಡ ದಾಳಿ ನಡೆಸಿ, ಆದಾಯಕ್ಕೂ ಮೀರಿದ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಿಸಿದ ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.

ಅಡ್ಡ ಮತದಾನ ಮಾಡಿದವರ ವಿರುದ್ಧ ಪಕ್ಷ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಿದೆ: ಅರಗ ಜ್ಞಾನೇಂದ್ರ

ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದವರ ವಿರುದ್ಧ ಪಕ್ಷ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಿದೆ ಎಂದು ಮಾಜಿ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಡ್ಡ ಮತದಾನ ಮಾಡಿದವರನ್ನು ಪತ್ತೆಹಚ್ಚಲು ಧರ್ಮಸ್ಥಳದಲ್ಲಿ ಆಣೆ-ಪ್ರಮಾಣ ಮಾಡುವ ವಿಚಾರಕ್ಕೆ ಪ್ರತಿಕ್ರಿಯಿಸಿ, ಬಿಜೆಪಿಯಂತಹ ಶಿಸ್ತಿನ ಪಕ್ಷದಲ್ಲಿ ಅಡ್ಡ ಮತದಾನ ಮಾಡಿರುವುದು ಪಕ್ಷಕ್ಕೆ ಮಾಡಿದ ದ್ರೋಹ. ಇಂತಹ ಘಟನೆ ನಡೆಯಬಾರದು. ಇದನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ ಎಂದು ಹೇಳಿದರು.

ಅಡ್ಡ ಮತದಾನದ ಬೆಳವಣಿಗೆಯಿಂದ ಪಕ್ಷದ ರಾಜ್ಯಾಧ್ಯಕ್ಷರು ವಿಚಲಿತರಾಗಿದ್ದಾರೆ. ಭಾವೋದ್ವೇಗದಲ್ಲಿ ಕೆಲವು ಹೇಳಿಕೆಗಳನ್ನು ನೀಡಿದ್ದಾರೆ. ಆದರೆ ಅಡ್ಡ ಮತದಾನ ಮಾಡಿದವರನ್ನು ಪತ್ತೆಹಚ್ಚಲು ಧರ್ಮಸ್ಥಳಕ್ಕೆ ಹೋಗುವ ಅಗತ್ಯವಿಲ್ಲ. ಬೇರೆ ಮಾರ್ಗಗಳ ಮೂಲಕ ಸತ್ಯಾಸತ್ಯತೆ ತಿಳಿದುಕೊಂಡು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಅಭಿಪ್ರಾಯಪಟ್ಟರು.

ಅಡ್ಡ ಮತದಾನ ಮಾಡಿದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸಬಾರದು ಎಂದು ಹೇಳಿದ ಅವರು, ಈ ಕುರಿತು ಪರಿಶೀಲನೆ ನಡೆಸಲು ಈಗಾಗಲೇ ಸಮಿತಿ ರಚಿಸಲಾಗಿದೆ. ಸಮಿತಿಯ ವರದಿ ಬಂದ ಬಳಿಕ ಯಾರು ಅಡ್ಡ ಮತದಾನ ಮಾಡಿದ್ದಾರೆ ಎಂಬುದು ಸ್ಪಷ್ಟವಾಗಲಿದೆ. ಅದಕ್ಕೆ ಸ್ವಲ್ಪ ಸಮಯ ಬೇಕಾಗಬಹುದು ಎಂದರು.

ಪಕ್ಷ ಈ ವಿಚಾರವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಇದೇ ಕಾರಣಕ್ಕೆ ರಾಜ್ಯಾಧ್ಯಕ್ಷರು ಹಾಗೂ ಪ್ರತಿಪಕ್ಷ ನಾಯಕರನ್ನು ದೆಹಲಿಗೆ ಕರೆಯಲಾಗಿದೆ. ತನಿಖೆ ಪೂರ್ಣಗೊಂಡ ಬಳಿಕ ಅಡ್ಡ ಮತದಾನ ಮಾಡಿದವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವುದು ಖಚಿತ ಎಂದು ಅರಗ ಜ್ಞಾನೇಂದ್ರ ತಿಳಿಸಿದ್ದಾರೆ.

error: Content is protected !!