Home Blog

ಲಾಡ್ಲೆ ಮಶಾಕ್ ದರ್ಗಾ ಗಲಾಟೆ ಕೇಸ್ ಹಿಂಪಡೆದ ಕಾಂಗ್ರೆಸ್ ಸರ್ಕಾರ

ಬೆಂಗಳೂರು: 2022ರಲ್ಲಿ ರಾಜ್ಯಾದ್ಯಂತ ಭಾರೀ ಸಂಚಲನ ಮೂಡಿಸಿದ್ದ ಕಲಬುರಗಿಯ ಆಳಂದ ಲಾಡ್ಲೆ ಮಶಾಕ್ ದರ್ಗಾ ಗಲಾಟೆ ಪ್ರಕರಣದಲ್ಲಿ ದಾಖಲಾಗಿದ್ದ ಕೇಸ್‌ಗಳನ್ನು ರಾಜ್ಯ ಸರ್ಕಾರ ಹಿಂಪಡೆದುಕೊಂಡಿದೆ. ಸಚಿವ ಸಂಪುಟ ಸಭೆಯಲ್ಲಿ ಕೈಗೊಳ್ಳಲಾದ ಈ ನಿರ್ಧಾರ ಇದೀಗ ತೀವ್ರ ರಾಜಕೀಯ ಚರ್ಚೆಗೆ ಕಾರಣವಾಗಿದೆ.

ವಿಧಾನಸಭಾ ಸಭಾಧ್ಯಕ್ಷ ಯು.ಟಿ. ಖಾದರ್ ಅವರ ಮನವಿ ಮೇರೆಗೆ ಪ್ರಕರಣ ಹಿಂಪಡೆಯಲು ಒಪ್ಪಿಗೆ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ. ಇದರೊಂದಿಗೆ ಪ್ರಕರಣದಲ್ಲಿ ಹೆಸರು ಕೇಳಿಬಂದಿದ್ದ ಕೆಲ ಮುಸ್ಲಿಂ ಯುವಕರು ಮತ್ತು ಮುಖಂಡರಿಗೆ ಕಾನೂನು ಸಂಕಷ್ಟದಿಂದ ತಾತ್ಕಾಲಿಕ ಮುಕ್ತಿ ಸಿಕ್ಕಿದೆ.

2022ರ ಶಿವರಾತ್ರಿ ಸಂದರ್ಭದಲ್ಲಿ ಆಳಂದ ಪಟ್ಟಣದ ಲಾಡ್ಲೆ ಮಶಾಕ್ ದರ್ಗಾದಲ್ಲಿರುವ ಶಿವಲಿಂಗ ಪೂಜೆ ವೇಳೆ ಗಲಾಟೆ ಉಂಟಾಗಿತ್ತು. ಶಿವಲಿಂಗದ ಮೇಲೆ ಅಪವಿತ್ರ ಕೃತ್ಯ ಎಸಗಲಾಗಿದೆ ಎಂಬ ಆರೋಪದ ನಂತರ ಪರಿಸ್ಥಿತಿ ಉದ್ವಿಗ್ನಗೊಂಡಿತ್ತು.

ಬಳಿಕ ಸ್ಥಳಕ್ಕೆ ತೆರಳಿದ್ದ ಅಂದಿನ ಕೇಂದ್ರ ಸಚಿವ ಭಗವಂತ ಖೂಬಾ ಸೇರಿದಂತೆ ಅಧಿಕಾರಿಗಳ ವಾಹನಗಳ ಮೇಲೆ ಕಲ್ಲು ತೂರಾಟ, ದಾಳಿ ಹಾಗೂ ಮಾರಕಾಸ್ತ್ರ ಪ್ರದರ್ಶನ ನಡೆದಿತ್ತು ಎನ್ನಲಾಗಿತ್ತು. ಪ್ರಕರಣ ಸಂಬಂಧ ಹಲವು ಮುಸ್ಲಿಂ ಮುಖಂಡರು ಮತ್ತು ಯುವಕರ ವಿರುದ್ಧ ಒಟ್ಟು 13 ಪ್ರಕರಣಗಳು ದಾಖಲಾಗಿದ್ದವು.

ಈಗ ಆ ಪ್ರಕರಣಗಳನ್ನು ಸರ್ಕಾರ ಹಿಂಪಡೆದುಕೊಂಡಿರುವುದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ವಿರೋಧ ಪಕ್ಷಗಳು ಕಾಂಗ್ರೆಸ್ ಸರ್ಕಾರದ ವಿರುದ್ಧ ‘ಅಲ್ಪಸಂಖ್ಯಾತರ ಓಲೈಕೆ ರಾಜಕಾರಣ’ ಆರೋಪ ಮಾಡುತ್ತಿದ್ದು, ಸರ್ಕಾರದ ನಿರ್ಧಾರಕ್ಕೆ ಸಾರ್ವಜನಿಕ ವಲಯದಲ್ಲೂ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

9ನೇ ತರಗತಿಗೆ ತ್ರಿಭಾಷಾ ನೀತಿ ಕಡ್ಡಾಯ?: ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಪೋಷಕರು

ನವದೆಹಲಿ: 9ನೇ ತರಗತಿ ವಿದ್ಯಾರ್ಥಿಗಳಿಗೆ ಮೂರು ಭಾಷೆಗಳ ಅಧ್ಯಯನವನ್ನು ಕಡ್ಡಾಯಗೊಳಿಸಿರುವ ಸಿಬಿಎಸ್‌ಇ ಹೊಸ ನೀತಿಯನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿದೆ.

ವಿದ್ಯಾರ್ಥಿಗಳು ಮತ್ತು ಪೋಷಕರು ಸಲ್ಲಿಸಿರುವ ಅರ್ಜಿಯನ್ನು ಹಿರಿಯ ವಕೀಲ ಮುಕುಲ್ ರೋಹಟಗಿ ಅವರು ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ನೇತೃತ್ವದ ತ್ರಿಸಭ್ಯ ಪೀಠದ ಮುಂದೆ ಪ್ರಸ್ತಾಪಿಸಿದರು.

9ನೇ ತರಗತಿಯಲ್ಲೇ ಎರಡು ಹೆಚ್ಚುವರಿ ಭಾಷೆಗಳನ್ನು ಕಲಿಯುವಂತೆ ಮಾಡುವುದು ವಿದ್ಯಾರ್ಥಿಗಳ ಮೇಲೆ ಅನಗತ್ಯ ಒತ್ತಡ ಹೇರುತ್ತದೆ ಎಂದು ಅರ್ಜಿದಾರರ ಪರ ವಾದಿಸಲಾಯಿತು.

“ಇದ್ದಕ್ಕಿದ್ದಂತೆ ಹೊಸ ಭಾಷೆಗಳನ್ನು ಕಲಿತು 10ನೇ ತರಗತಿ ಬೋರ್ಡ್ ಪರೀಕ್ಷೆಗೆ ಸಿದ್ಧರಾಗುವುದು ಹೇಗೆ ಸಾಧ್ಯ? ಇದು ವಿದ್ಯಾರ್ಥಿಗಳಲ್ಲಿ ಗೊಂದಲ ಮತ್ತು ಅವ್ಯವಸ್ಥೆ ಸೃಷ್ಟಿಸುತ್ತದೆ” ಎಂದು ಮುಕುಲ್ ರೋಹಟಗಿ ನ್ಯಾಯಾಲಯದ ಗಮನಕ್ಕೆ ತಂದರು.

ವಾದ ಆಲಿಸಿದ ಸುಪ್ರೀಂ ಕೋರ್ಟ್ ಪೀಠ, ಈ ವಿಷಯವನ್ನು ಮುಂದಿನ ವಾರ ವಿಚಾರಣೆಗೆ ಪಟ್ಟಿ ಮಾಡುವುದಾಗಿ ತಿಳಿಸಿದೆ.

ಗಮನಾರ್ಹವಾಗಿ, ಈ ಹೊಸ ನೀತಿ ರಾಷ್ಟ್ರೀಯ ಶಿಕ್ಷಣ ನೀತಿ–2020ರ ತ್ರಿಭಾಷಾ ಸೂತ್ರಕ್ಕೆ ಅನುಗುಣವಾಗಿ ಜಾರಿಗೊಳ್ಳುತ್ತಿದೆ. ವಿದ್ಯಾರ್ಥಿಗಳು ಕನಿಷ್ಠ ಎರಡು ಭಾರತೀಯ ಭಾಷೆಗಳನ್ನು ಒಳಗೊಂಡಂತೆ ಹಲವು ಭಾಷೆಗಳನ್ನು ಕಲಿಯಬೇಕು ಎಂಬುದು ನೀತಿಯ ಉದ್ದೇಶವಾಗಿದೆ.

ಇದುವರೆಗೆ ಸಿಬಿಎಸ್‌ಇ ವಿದ್ಯಾರ್ಥಿಗಳು 10ನೇ ತರಗತಿವರೆಗೆ ಸಾಮಾನ್ಯವಾಗಿ ಇಂಗ್ಲಿಷ್ ಹಾಗೂ ಇನ್ನೊಂದು ಭಾಷೆಯನ್ನು ಮಾತ್ರ ಅಧ್ಯಯನ ಮಾಡುತ್ತಿದ್ದರು. ಆದರೆ ಹೊಸ ಚೌಕಟ್ಟಿನ ಪ್ರಕಾರ, 9ನೇ ತರಗತಿಯಿಂದ ಹೆಚ್ಚುವರಿ ಭಾಷಾ ಅಧ್ಯಯನ ಕಡ್ಡಾಯವಾಗಲಿದೆ ಎಂದು ವರದಿಯಾಗಿದೆ.

ಈ ಬದಲಾವಣೆ ಮಾಧ್ಯಮಿಕ ಹಂತದ ವಿದ್ಯಾರ್ಥಿಗಳ ಪಠ್ಯಭಾರವನ್ನು ಹೆಚ್ಚಿಸಲಿದೆ ಎಂಬ ಆತಂಕವನ್ನು ವಿದ್ಯಾರ್ಥಿಗಳು ಮತ್ತು ಪೋಷಕರು ವ್ಯಕ್ತಪಡಿಸಿದ್ದಾರೆ.

ವಚನಾನಂದ ಶ್ರೀಗಳಿಗೆ ಬಂಧನ ಭೀತಿ? ಪೋಕ್ಸೊ ಪ್ರಕರಣದಲ್ಲಿ ಜಾಮೀನು ರದ್ದು ಕೋರಿ ಪೊಲೀಸರ ಅರ್ಜಿ

ದಾವಣಗೆರೆ: ಹರಿಹರ ಪಂಚಮಸಾಲಿ ಗುರುಪೀಠದ ವಚನಾನಂದ ಸ್ವಾಮೀಜಿ ವಿರುದ್ಧ ದಾಖಲಾಗಿರುವ ಪೋಕ್ಸೊ ಪ್ರಕರಣ ಇದೀಗ ನಿರ್ಣಾಯಕ ಹಂತ ತಲುಪಿದೆ. ಈಗಾಗಲೇ ನಿರೀಕ್ಷಣಾ ಜಾಮೀನು ಪಡೆದಿರುವ ಶ್ರೀಗಳ ವಿರುದ್ಧ ಪೊಲೀಸರು ಕಠಿಣ ನಿಲುವು ತಳೆದಿದ್ದು, ಜಾಮೀನು ರದ್ದುಗೊಳಿಸುವಂತೆ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದಾರೆ.

ಲೈಂಗಿಕ ದೌರ್ಜನ್ಯ ಮತ್ತು ಹಲ್ಲೆ ಆರೋಪದಡಿ ಕಳೆದ ವಾರ ವಚನಾನಂದ ಶ್ರೀಗಳ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಆದರೆ ಪ್ರಕರಣ ದಾಖಲಾಗುವ ಮೊದಲುವೇ ಅವರು ನಿರೀಕ್ಷಣಾ ಜಾಮೀನು ಪಡೆದಿದ್ದರು.

ಈ ಬೆಳವಣಿಗೆಯ ನಡುವೆಯೇ ತನಿಖಾಧಿಕಾರಿ ಸುರೇಶ್ ಸಗರಿ ಇದೀಗ ಜಾಮೀನು ರದ್ದು ಕೋರಿ ಕೋರ್ಟ್ ಮೆಟ್ಟಿಲೇರಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದ ಪ್ರಮುಖ ಮಾಹಿತಿಗಳನ್ನು ಒಳಗೊಂಡ ವರದಿಯನ್ನು ಹರಿಹರ ಪೊಲೀಸರು ಸೀಲ್ಡ್ ಕವರ್‌ನಲ್ಲಿ ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿದ್ದಾರೆ.

ಪೊಲೀಸರ ಅರ್ಜಿಯ ವಿಚಾರಣೆಯನ್ನು ಮೇ 29ರಂದು ದಾವಣಗೆರೆಯ ವಿಶೇಷ ಪೋಕ್ಸೊ ನ್ಯಾಯಾಲಯ ನಡೆಸಲಿದ್ದು, ನ್ಯಾಯಾಲಯದ ತೀರ್ಪಿನ ಮೇಲೆ ಮುಂದಿನ ಕಾನೂನು ಪ್ರಕ್ರಿಯೆ ಅವಲಂಬಿತವಾಗಿದೆ. ಜಾಮೀನು ರದ್ದಾದರೆ ವಚನಾನಂದ ಶ್ರೀಗಳ ಬಂಧನ ಸಾಧ್ಯತೆ ಹೆಚ್ಚಲಿದೆ.

ಪ್ರಕರಣದ ಪ್ರಕಾರ, 16 ವರ್ಷದ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಸ್ವಾಮೀಜಿ ವಿರುದ್ಧ ದೂರು ದಾಖಲಾಗಿದೆ. ಸಂತ್ರಸ್ತ ಬಾಲಕನ ತಾಯಿ ಮೊದಲಿಗೆ ಲಕ್ಷ್ಮೇಶ್ವರ ಠಾಣೆಯಲ್ಲಿ ದೂರು ನೀಡಿದ್ದು, ನಂತರ ಪ್ರಕರಣವನ್ನು ಹರಿಹರ ಗ್ರಾಮಾಂತರ ಠಾಣೆಗೆ ವರ್ಗಾಯಿಸಲಾಗಿತ್ತು.

ಹರಿಹರ ಪಂಚಮಸಾಲಿ ಪೀಠದಿಂದ ಸ್ವಾಮೀಜಿಯನ್ನು ಪದಚ್ಯುತಗೊಳಿಸಿದ ಕೆಲವೇ ದಿನಗಳಲ್ಲಿ ಈ ಪ್ರಕರಣ ದಾಖಲಾಗಿರುವುದು ರಾಜ್ಯಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿದೆ.

Mandya: ಕಾವೇರಿ ನದಿಯಲ್ಲಿ ಈಜಲು ಹೋಗಿ ಇಬ್ಬರು ಯುವಕರು ನೀರುಪಾಲು!

ಮಂಡ್ಯ: ಕಾವೇರಿ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರಲ್ಲಿ ಮುಳುಗಿ ಸಾವನ್ನಪ್ಪಿರುವ ದುರ್ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಬಲಮುರಿ ಬಳಿ ನಡೆದಿದೆ.

ಮೃತರನ್ನು ಚಾಮರಾಜನಗರ ಜಿಲ್ಲೆಯ ಸಂತೆಮರಳಿ ಸಮೀಪದ ತಮರವಾಡಿ ಗ್ರಾಮದ ಮೊಹನ್ ಕುಮಾರ್ ಹಾಗೂ ಮೈಸೂರಿನ ಜಯಪುರ ಸಮೀಪದ ಕೆಳಹಳ್ಳಿ ಗ್ರಾಮದ ರವಿಚಂದ್ರ ಎಂದು ಗುರುತಿಸಲಾಗಿದೆ. ಇಬ್ಬರೂ 21 ವರ್ಷದವರಾಗಿದ್ದಾರೆ.

ಮೈಸೂರಿನ ಬೆಳಗೊಳ ಕೈಗಾರಿಕಾ ಪ್ರದೇಶದಲ್ಲಿರುವ ಕೇನ್ಸ್ ಟೆಕ್ನಾಲಜಿಯಲ್ಲಿ ಕೆಲಸ ಮಾಡುತ್ತಿದ್ದ ಈ ಇಬ್ಬರು ಯುವಕರು, ಐಟಿಐ ಶಿಕ್ಷಣ ಮುಗಿಸಿ ಉದ್ಯೋಗದಲ್ಲಿದ್ದರು. ತಮ್ಮ ಸ್ನೇಹಿತ ವಿಕಾಸ್ ಜೊತೆಗೂಡಿ ಮೂವರು ಬಲಮುರಿ ಪ್ರವಾಸಿ ತಾಣಕ್ಕೆ ಬಂದಿದ್ದ ವೇಳೆ ಈ ದುರಂತ ಸಂಭವಿಸಿದೆ.

ಕಾವೇರಿ ನದಿಯಲ್ಲಿ ಈಜಲು ಇಳಿದಿದ್ದ ವೇಳೆ ಮೊಹನ್ ಕುಮಾರ್ ಮತ್ತು ರವಿಚಂದ್ರ ನೀರಿನಲ್ಲಿ ಮುಳುಗಿದ್ದಾರೆ. ಇದನ್ನು ಗಮನಿಸಿದ ಸ್ನೇಹಿತ ವಿಕಾಸ್ ಸಮೀಪದ ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದ ರೈತರ ಸಹಾಯದಿಂದ ಕೆಆರ್‌ಎಸ್ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ.

ಮಾಹಿತಿ ತಿಳಿಯುತ್ತಿದ್ದಂತೆಯೇ ವೃತ್ತ ನಿರೀಕ್ಷಕ ವಿವೇಕಾನಂದ, ಪಿಎಸ್ಐ ರಮೇಶ್ ಕರ್ಕಿಕಟ್ಟೆ ಹಾಗೂ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದಾರೆ.

ಸ್ಥಳೀಯ ನುರಿತ ಈಜುಗಾರರು ಮತ್ತು ಅಗ್ನಿಶಾಮಕ ದಳ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಇಬ್ಬರ ಮೃತದೇಹಗಳನ್ನು ಹೊರತೆಗೆದಿದ್ದಾರೆ. ಮೃತದೇಹಗಳನ್ನು ಮೈಸೂರಿನ ಕೆ.ಆರ್ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದ್ದು, ಈ ಸಂಬಂಧ ಕೆಆರ್‌ಎಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

 

 

 

ಕೇರಳ ವಿಧಾನಸಭೆಯ ನೂತನ ಸ್ಪೀಕರ್ ಆಗಿ “ಕೈ” ನಾಯಕ ತಿರುವಾಂಚೂರ್ ರಾಧಾಕೃಷ್ಣನ್ ಆಯ್ಕೆ!

ತಿರುವನಂತಪುರಂ: ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಶಾಸಕ ತಿರುವನಂಚೂರು ರಾಧಾಕೃಷ್ಣನ್ ಅವರು ಕೇರಳದ 16ನೇ ವಿಧಾನಸಭೆಯ ನೂತನ ಸ್ಪೀಕರ್ ಆಗಿ ಆಯ್ಕೆಯಾಗಿದ್ದಾರೆ.

ಶುಕ್ರವಾರ ನಡೆದ ಸ್ಪೀಕರ್ ಚುನಾವಣೆಯಲ್ಲಿ ಯುಡಿಎಫ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ರಾಧಾಕೃಷ್ಣನ್ 101 ಮತಗಳನ್ನು ಪಡೆದು ಭರ್ಜರಿ ಗೆಲುವು ಸಾಧಿಸಿದರು.

140 ಸದಸ್ಯರ ವಿಧಾನಸಭೆಯಲ್ಲಿ ಹಂಗಾಮಿ ಸ್ಪೀಕರ್ ಜಿ. ಸುಧಾಕರನ್ ಚುನಾವಣಾ ಅಧಿಕಾರಿಯಾಗಿದ್ದ ಕಾರಣ ಮತದಾನದಿಂದ ದೂರ ಉಳಿದಿದ್ದರು. ಹೀಗಾಗಿ ಒಟ್ಟು 139 ಮತಗಳು ಚಲಾವಣೆಯಾಗಿದ್ದು, ಅದರಲ್ಲಿ ರಾಧಾಕೃಷ್ಣನ್ ಬಹುಮತದೊಂದಿಗೆ ಸ್ಪೀಕರ್ ಸ್ಥಾನಕ್ಕೇರಿದರು.

ಎಲ್‌ಡಿಎಫ್ ಅಭ್ಯರ್ಥಿ ಎಸಿ ಮೊಯ್ದೀನ್ 35 ಮತಗಳನ್ನು ಪಡೆದರೆ, ಬಿಜೆಪಿ ಅಭ್ಯರ್ಥಿ ಬಿಬಿ ಗೋಪಕುಮಾರ್ ಕೇವಲ 3 ಮತಗಳಿಗೆ ಸೀಮಿತರಾದರು.

76 ವರ್ಷದ ತಿರುವನಂಚೂರು ರಾಧಾಕೃಷ್ಣನ್ 1991ರಿಂದ ನಿರಂತರವಾಗಿ ವಿಧಾನಸಭಾ ರಾಜಕಾರಣದಲ್ಲಿ ಸಕ್ರಿಯರಾಗಿದ್ದು, ಈಗಾಗಲೇ ಎಂಟು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ.

2011ರಿಂದ 2016ರವರೆಗೆ ಉಮ್ಮನ್ ಚಾಂಡಿ ನೇತೃತ್ವದ ಸರ್ಕಾರದಲ್ಲಿ ಗೃಹ ಸಚಿವರಾಗಿ ಸೇವೆ ಸಲ್ಲಿಸಿದ್ದ ಅವರು, ಬಳಿಕ ಅರಣ್ಯ, ಸಾರಿಗೆ, ಕ್ರೀಡೆ, ಸಿನಿಮಾ ಮತ್ತು ಪರಿಸರ ಖಾತೆಗಳನ್ನು ಕೂಡ ನಿರ್ವಹಿಸಿದ್ದರು.

2026ರ ವಿಧಾನಸಭಾ ಚುನಾವಣೆಯಲ್ಲಿ ಕೊಟ್ಟಾಯಂ ಕ್ಷೇತ್ರದಿಂದ ಸ್ಪರ್ಧಿಸಿದ್ದ ರಾಧಾಕೃಷ್ಣನ್ ಸುಮಾರು 36 ಸಾವಿರ ಮತಗಳ ಅಂತರದಿಂದ ಜಯಗಳಿಸಿದ್ದರು.

ಚುನಾವಣಾ ಅಫಿಡವಿಟ್ ಪ್ರಕಾರ, ರಾಧಾಕೃಷ್ಣನ್ ಅವರ ಒಟ್ಟು ಆಸ್ತಿ ಮೌಲ್ಯ ಸುಮಾರು 3 ಕೋಟಿ ರೂಪಾಯಿಯಾಗಿದ್ದು, 12.8 ಲಕ್ಷ ರೂಪಾಯಿ ಸಾಲವಿದೆ. ವಾರ್ಷಿಕ ಆದಾಯವನ್ನು 10.1 ಲಕ್ಷ ರೂಪಾಯಿ ಎಂದು ಘೋಷಿಸಿದ್ದಾರೆ.

ಕರ್ನಾಟಕದ 4 ಸ್ಥಾನ ಸೇರಿ, ರಾಜ್ಯಸಭೆಯ 24 ಸ್ಥಾನಗಳ ಚುನಾವಣೆಗೆ ದಿನಾಂಕ ಘೋಷಣೆ

ನವದೆಹಲಿ/ಬೆಂಗಳೂರು: ಕರ್ನಾಟಕ ಸೇರಿದಂತೆ ದೇಶದ 10 ರಾಜ್ಯಗಳ 24 ರಾಜ್ಯಸಭಾ ಸ್ಥಾನಗಳಿಗೆ ಕೇಂದ್ರ ಚುನಾವಣಾ ಆಯೋಗ ಚುನಾವಣೆ ಘೋಷಣೆ ಮಾಡಿದೆ. ಜೂನ್ 18ರಂದು ಮತದಾನ ನಡೆಯಲಿದ್ದು, ಕರ್ನಾಟಕದ ನಾಲ್ಕು ಸ್ಥಾನಗಳಿಗೂ ಚುನಾವಣೆ ನಡೆಯಲಿದೆ.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಸೇರಿದಂತೆ ಹಲವು ಹಾಲಿ ಸದಸ್ಯರ ಅವಧಿ ಜೂನ್ ಹಾಗೂ ಜುಲೈ ತಿಂಗಳಲ್ಲಿ ಪೂರ್ಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಈ ಚುನಾವಣೆ ನಡೆಯುತ್ತಿದೆ.

ಚುನಾವಣೆಗೆ ಸಂಬಂಧಿಸಿದ ಅಧಿಸೂಚನೆಯನ್ನು ಜೂನ್ 1ರಂದು ಹೊರಡಿಸಲಾಗುತ್ತದೆ. ಜೂನ್ 1ರಿಂದ 8ರವರೆಗೆ ನಾಮಪತ್ರ ಸಲ್ಲಿಕೆಗೆ ಅವಕಾಶ ನೀಡಲಾಗಿದೆ. ಜೂನ್ 9ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಜೂನ್ 11ರವರೆಗೆ ನಾಮಪತ್ರ ಹಿಂಪಡೆಯಲು ಕಾಲಾವಕಾಶ ಇರುತ್ತದೆ.

ಜೂನ್ 18ರಂದು ಬೆಳಿಗ್ಗೆ 9ರಿಂದ ಸಂಜೆ 4ರವರೆಗೆ ಮತದಾನ ನಡೆಯಲಿದ್ದು, ಅದೇ ದಿನ ಮತ ಎಣಿಕೆಯೂ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಜೂನ್ 20ರೊಳಗೆ ಸಂಪೂರ್ಣ ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳಲಿದೆ.

ರಾಜ್ಯವಾರು ನೋಡಿದರೆ ಕರ್ನಾಟಕ, ಆಂಧ್ರಪ್ರದೇಶ ಹಾಗೂ ಗುಜರಾತ್ ರಾಜ್ಯಗಳಲ್ಲಿ ತಲಾ ನಾಲ್ಕು ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ತಲಾ ಮೂರು ಸ್ಥಾನಗಳು ಖಾಲಿಯಾಗಲಿವೆ.

ಇನ್ನೂ ಜಾರ್ಖಂಡ್‌ನಲ್ಲಿ ಎರಡು ಸ್ಥಾನಗಳಿಗೆ ಹಾಗೂ ಮಣಿಪುರ, ಮೇಘಾಲಯ, ಅರುಣಾಚಲ ಪ್ರದೇಶ ಮತ್ತು ಮಿಜೋರಾಂ ರಾಜ್ಯಗಳಲ್ಲಿ ತಲಾ ಒಂದು ಸ್ಥಾನಕ್ಕೆ ಚುನಾವಣೆ ನಡೆಯಲಿದೆ.

ಇದೇ ವೇಳೆ, ಜಾರ್ಖಂಡ್, ತಮಿಳುನಾಡು ಹಾಗೂ ಮಹಾರಾಷ್ಟ್ರ ರಾಜ್ಯಗಳಲ್ಲಿ ತಲಾ ಒಂದು ಸ್ಥಾನಕ್ಕೆ ಉಪಚುನಾವಣೆ ನಡೆಯುವ ಸಾಧ್ಯತೆ ಇದೆ ಎಂದು ಚುನಾವಣಾ ಆಯೋಗ ಮಾಹಿತಿ ನೀಡಿದೆ.

ನಿವೃತ್ತಿಯಾಗಲಿರುವ ಸದಸ್ಯರಲ್ಲಿ ಬಿಜೆಪಿಯ 11 ಮಂದಿ ಹಾಗೂ ಕಾಂಗ್ರೆಸ್‌ನ ನಾಲ್ವರು ಸಂಸದರು ಸೇರಿದ್ದಾರೆ. ಪ್ರಮುಖ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ದಿಗ್ವಿಜಯ್ ಸಿಂಗ್ ಹಾಗೂ ಎಚ್.ಡಿ. ದೇವೇಗೌಡರ ಅವಧಿಯೂ ಅಂತ್ಯಗೊಳ್ಳಲಿದೆ.

ಮತದಾನ ಪ್ರಕ್ರಿಯೆಗೆ ಸಂಬಂಧಿಸಿದಂತೆ ವಿಶೇಷ ಸೂಚನೆಗಳನ್ನು ನೀಡಿರುವ ಚುನಾವಣಾ ಆಯೋಗ, ಮತದಾನದ ವೇಳೆ ಚುನಾವಣಾಧಿಕಾರಿಗಳು ನೀಡುವ ವಿಶೇಷ ನೇರಳೆ ಬಣ್ಣದ ಸ್ಕೆಚ್ ಪೆನ್ ಅನ್ನು ಮಾತ್ರ ಬಳಸಬೇಕು ಎಂದು ಸ್ಪಷ್ಟಪಡಿಸಿದೆ.

ದಶಕದ ಹೋರಾಟಕ್ಕೆ ಸಿಕ್ಕ ಫಲ! ಕೊಪ್ಪಳದಲ್ಲಿ ಮಾಲಿನ್ಯ ಕಾರ್ಖಾನೆಗಳಿಗೆ ಬೀಗ

0

ಕೊಪ್ಪಳ: ಪರಿಸರ ಮಾಲಿನ್ಯದಿಂದ ಜನಜೀವನ ಅಸ್ತವ್ಯಸ್ತವಾಗುತ್ತಿದೆ ಎಂಬ ಆರೋಪಗಳ ನಡುವೆ ಕೊಪ್ಪಳ ಜಿಲ್ಲಾಡಳಿತ ಮಹತ್ವದ ಕ್ರಮ ಕೈಗೊಂಡಿದ್ದು, ತಾಲೂಕಿನ ಎರಡು ಪ್ರಮುಖ ಕಾರ್ಖಾನೆಗಳನ್ನು ಸೀಜ್ ಮಾಡಿದೆ. ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ನಿರ್ದೇಶನದಂತೆ ಈ ಕಾರ್ಯಾಚರಣೆ ನಡೆದಿದ್ದು, ಸಾರ್ವಜನಿಕರಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಹಾಲುವರ್ತಿ ಸಮೀಪದ ಪಿಬಿಎಸ್-1 ಕಾರ್ಖಾನೆ ಮತ್ತು ಅಲ್ಲಾನಗರ ವ್ಯಾಪ್ತಿಯ ಹೊಸಪೇಟೆ ಇಸ್ಪಾತ್ ಕಾರ್ಖಾನೆಗಳಿಗೆ ಅಧಿಕಾರಿಗಳು ಬೀಗ ಹಾಕಿದ್ದಾರೆ. ಪರಿಸರ ನಿಯಮ ಉಲ್ಲಂಘನೆ ಹಾಗೂ ವಾಯುಮಾಲಿನ್ಯ ಹೆಚ್ಚಳದ ಹಿನ್ನೆಲೆಯಲ್ಲಿ ಈ ಕ್ರಮ ಜಾರಿಗೊಂಡಿದೆ.

ಕಾರ್ಖಾನೆಗಳಿಂದ ಹೊರಸೂಸುತ್ತಿದ್ದ ಹೊಗೆ ಮತ್ತು ದೂಳಿನಿಂದ ಕೃಷಿ ಜಮೀನುಗಳು, ಕುಡಿಯುವ ನೀರು ಹಾಗೂ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ ಎಂದು ಸ್ಥಳೀಯರು ಹಲವು ವರ್ಷಗಳಿಂದ ಪ್ರತಿಭಟನೆ ನಡೆಸುತ್ತಿದ್ದರು.

ಕಳೆದ ತಿಂಗಳು ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ನರೇಂದ್ರ ಸ್ವಾಮಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಒಟ್ಟು ಐದು ಕಾರ್ಖಾನೆಗಳಿಗೆ ಕ್ಲೋಸರ್ ನೋಟಿಸ್ ಜಾರಿಗೊಳಿಸಲಾಗಿತ್ತು. ಇದೀಗ ಅದರ ಭಾಗವಾಗಿ ಎರಡು ಕಾರ್ಖಾನೆಗಳಿಗೆ ಸೀಲ್ ಹಾಕಲಾಗಿದೆ.

ಆದರೆ ಜಿಲ್ಲಾಡಳಿತದ ಕ್ರಮದ ಬಗ್ಗೆ ಪ್ರಶ್ನೆಗಳೂ ಕೇಳಿಬರುತ್ತಿವೆ. ಸೀಜ್ ಮಾಡಲಾಗಿರುವ ಹೊಸಪೇಟೆ ಇಸ್ಪಾತ್ ಕಾರ್ಖಾನೆ ಕಳೆದ ಒಂದು ವರ್ಷದಿಂದಲೇ ಕಾರ್ಯನಿರ್ವಹಿಸುತ್ತಿರಲಿಲ್ಲ ಎಂಬ ಮಾಹಿತಿ ಹರಿದಾಡುತ್ತಿದೆ.

ಹೀಗಾಗಿ ಈಗಾಗಲೇ ಬಂದ್ ಆಗಿದ್ದ ಘಟಕವನ್ನು ಸೀಜ್ ಮಾಡಿ ಅಧಿಕಾರಿಗಳು ಕೇವಲ ತೋರಿಕೆಗೆ ಕ್ರಮ ಕೈಗೊಂಡರಾ ಎಂಬ ಅನುಮಾನ ಸ್ಥಳೀಯರಲ್ಲಿ ಮೂಡಿದೆ. ದಿನನಿತ್ಯ ಪರಿಸರ ಮಾಲಿನ್ಯ ಉಂಟುಮಾಡುತ್ತಿರುವ ಉಳಿದ ಮೂರು ಕಾರ್ಖಾನೆಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಯಾವಾಗ ಎನ್ನುವ ಪ್ರಶ್ನೆ ಇದೀಗ ತೀವ್ರವಾಗಿದೆ.

ಆಲಿಕಲ್ಲು ಮಳೆ ಹಾಗೂ ಬಿರುಗಾಳಿಗೆ ತತ್ತರಿಸಿದ ಬೆಂಗಳೂರು: ಹತ್ತಾರು ಅವಾಂತರಗಳಿಂದ ಜನ ಹೈರಾಣು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿಗೆ ಮಳೆರಾಯ ಎಂಟ್ರಿ ಕೊಟ್ಟಿದ್ದು, ಗುರುವಾರ ಸಂಜೆ ಸುರಿದ ಭಾರೀ ಮಳೆ ಹಲವು ಅವಾಂತರಗಳಿಗೆ ಕಾರಣವಾಗಿದೆ. ನಗರದ ವಿವಿಧ ಭಾಗಗಳಲ್ಲಿ ಬೃಹತ್ ಮರಗಳು ಧರೆಗುರುಳಿದ್ದು, ವಾಹನಗಳು ಜಖಂಗೊಂಡಿವೆ. ಕೆಲವೆಡೆ ರಸ್ತೆ ಕುಸಿತವೂ ಸಂಭವಿಸಿದ್ದು, ಜನರಲ್ಲಿ ಆತಂಕ ಮೂಡಿಸಿದೆ.

ರಾಜಾಜಿನಗರದ ವೆಸ್ಟ್ ಆಫ್ ಕಾರ್ಡ್ ರಸ್ತೆಯಲ್ಲಿ ಬೃಹದಾಕಾರದ ಮರವೊಂದು ಏಕಾಏಕಿ ರಸ್ತೆಗೆ ಉರುಳಿಬಿದ್ದಿದೆ. ಪರಿಣಾಮ ಅಲ್ಲೇ ನಿಂತಿದ್ದ ಎರಡು ಕಾರುಗಳು ಜಖಂಗೊಂಡಿವೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಮರ ತೆರವುಗೊಳಿಸುವ ಕಾರ್ಯಾಚರಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಆ ಮಾರ್ಗದಲ್ಲಿ ಸಂಚಾರವನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ.

ಇನ್ನೊಂದೆಡೆ, ಯುಬಿ ಸಿಟಿಯ ಸದರ್ನ್ ಸ್ಟಾರ್ ಹೋಟೆಲ್ ಮುಂಭಾಗ ಭಾರೀ ಮಳೆಗೆ ರಸ್ತೆ ಕುಸಿದಿದ್ದು, ಅಲ್ಲೇ ನಿಂತಿದ್ದ ಇನ್ನೋವಾ ಕಾರೊಂದು ಕುಸಿದ ಭಾಗದಲ್ಲಿ ಸಿಲುಕಿಕೊಂಡಿದೆ. ರಸ್ತೆ ಕುಸಿದ ದೃಶ್ಯ ಕಂಡು ಜನರು ಬೆಚ್ಚಿಬಿದ್ದಿದ್ದು, ಕಳಪೆ ಕಾಮಗಾರಿಯೇ ಈ ಘಟನೆಗೆ ಕಾರಣ ಎಂದು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ನಂದಿನಿ ಲೇಔಟ್‌ನ 4ನೇ ಬ್ಲಾಕ್‌ನಲ್ಲಿ ಒಂದೇ ರಸ್ತೆಯಲ್ಲಿ ಐದಾರು ಮರಗಳು ನೆಲಕ್ಕುರುಳಿವೆ. ಪರಿಣಾಮ ಐದಕ್ಕೂ ಹೆಚ್ಚು ವಾಹನಗಳು ಹಾನಿಗೊಳಗಾಗಿವೆ. ಅಂಗಡಿಗಳ ಮುಂಭಾಗದ ಶೆಡ್‌ಗಳು ಹಾಗೂ ಮನೆಗಳ ಮೇಲೂ ಮರಗಳು ಬಿದ್ದಿದ್ದು, ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಸ್ಥಳಕ್ಕೆ ದೌಡಾಯಿಸಿರುವ ಬಿಬಿಎಂಪಿ ಸಿಬ್ಬಂದಿ ಮರ ತೆರವು ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಮಹಾಲಕ್ಷ್ಮಿ ಲೇಔಟ್‌ನ ಪೈಪ್‌ಲೈನ್ ರಸ್ತೆಯಲ್ಲೂ ಭಾರೀ ಗಾತ್ರದ ಮರವೊಂದು ಕಾರಿನ ಮೇಲೆ ಬಿದ್ದು ಕಾರು ಜಖಂಗೊಂಡಿದೆ. ಅಲ್ಲದೆ ವರದರಾಜಸ್ವಾಮಿ ದೇವಸ್ಥಾನದ ಆವರಣದಲ್ಲಿದ್ದ ಮರ ದೇವಾಲಯದ ಮೇಲ್ಚಾವಣಿ ಮೇಲೆ ಬಿದ್ದಿದೆ.

ಇನ್ನೂ ಪುಲಿಕೇಶಿನಗರ ಮುಖ್ಯರಸ್ತೆ, ವಿಜಯನಗರ ಹಾಗೂ ಮಲ್ಲೇಶ್ವರದ 7ನೇ ಅಡ್ಡರಸ್ತೆಯಲ್ಲೂ ಮರಗಳು ಧರೆಗುರುಳಿವೆ. ವಿಜಯನಗರದಲ್ಲಿ ಮರದ ಕೆಳಗೆ ನಿಲ್ಲಿಸಿದ್ದ ಬೈಕ್ ಜಖಂಗೊಂಡಿದ್ದು, ಮಲ್ಲೇಶ್ವರದಲ್ಲಿ ವಿದ್ಯುತ್ ಕಂಬಗಳಿಗೂ ಹಾನಿಯಾಗಿದೆ.

ನಗರದಲ್ಲಿ ಮಳೆ ಮುಂದುವರಿಯುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಎಚ್ಚರಿಕೆಯಿಂದ ಸಂಚರಿಸುವಂತೆ ಅಧಿಕಾರಿಗಳು ಸೂಚಿಸಿದ್ದಾರೆ.

ಕಾರವಾರಕ್ಕೆ 100 ಕೋಟಿ ರೂ. ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ: ಸಚಿವ ಸಂಪುಟ ಗ್ರೀನ್ ಸಿಗ್ನಲ್

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆ ಮಹತ್ವದ ತೀರ್ಮಾನಗಳೊಂದಿಗೆ ಮುಕ್ತಾಯಗೊಂಡಿದೆ. ಆರೋಗ್ಯ, ಶಿಕ್ಷಣ, ನೀರಾವರಿ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಸಂಬಂಧಿಸಿದ ಹಲವು ಯೋಜನೆಗಳಿಗೆ ಸಚಿವ ಸಂಪುಟ ಅನುಮೋದನೆ ನೀಡಿದೆ.

ಉತ್ತರ ಕನ್ನಡ ಭಾಗದ ಜನರ ಬಹುಕಾಲದ ಬೇಡಿಕೆಯಾಗಿದ್ದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆವರಣದಲ್ಲಿ 200 ಹಾಸಿಗೆಗಳ ಸಾಮರ್ಥ್ಯದ ಹೊಸ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಡವನ್ನು 100 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

ಶಿಕ್ಷಣ ಕ್ಷೇತ್ರದಲ್ಲಿಯೂ ಸರ್ಕಾರ ಮಹತ್ವದ ಘೋಷಣೆ ಮಾಡಿದೆ. ಸರ್ಕಾರಿ ಶಾಲೆಗಳಲ್ಲಿ ಓದಿ 10ನೇ ತರಗತಿಯಲ್ಲಿ ಗಣಿತ ಮತ್ತು ವಿಜ್ಞಾನ ವಿಷಯಗಳಲ್ಲಿ ಹೆಚ್ಚು ಅಂಕ ಪಡೆದ ಹಿಂದುಳಿದ ವರ್ಗಗಳ 500 ವಿದ್ಯಾರ್ಥಿಗಳಿಗೆ ಉಚಿತ ವಸತಿ ಸಹಿತ ಪಿಯುಸಿ ಶಿಕ್ಷಣ ಹಾಗೂ NEET, JEE, CET ಪರೀಕ್ಷಾ ಪೂರ್ವ ತರಬೇತಿ ನೀಡಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಈ ಯೋಜನೆಗೆ 15 ಕೋಟಿ ರೂಪಾಯಿ ವೆಚ್ಚ ಮಾಡಲಾಗುತ್ತಿದೆ.

ಇನ್ನೊಂದೆಡೆ, ಏಷ್ಯನ್ ಡೆವಲಪ್‌ಮೆಂಟ್ ಬ್ಯಾಂಕ್ ನೆರವಿನ ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿವರ್ತನೆ ಯೋಜನೆಯಡಿ 53 ಸರ್ಕಾರಿ ಪದವಿ ಕಾಲೇಜುಗಳು, 14 ಪಾಲಿಟೆಕ್ನಿಕ್ ಕಾಲೇಜುಗಳು ಹಾಗೂ ಐದು ಉತ್ಕೃಷ್ಟತಾ ಕೇಂದ್ರಗಳಿಗೆ ಒಟ್ಟು 802 ಕೋಟಿ ರೂಪಾಯಿ ಮೌಲ್ಯದ ವಸ್ತುಗಳ ಖರೀದಿಗೆ ಅನುಮೋದನೆ ದೊರೆತಿದೆ.

ಆರೋಗ್ಯ ಕ್ಷೇತ್ರದಲ್ಲಿ ನಗರ ಆರೋಗ್ಯ ಕೇಂದ್ರಗಳು, ನಮ್ಮ ಕ್ಲಿನಿಕ್‌ಗಳು ಹಾಗೂ ವೈದ್ಯಕೀಯ ಕಾಲೇಜು ಆಸ್ಪತ್ರೆಗಳಿಗೆ ಅಗತ್ಯ ಉಪಕರಣ ಮತ್ತು ಡಿಜಿಟಲೀಕರಣ ಕಾಮಗಾರಿಗಳಿಗೆ ಕೋಟ್ಯಂತರ ರೂಪಾಯಿ ಅನುದಾನ ಮಂಜೂರು ಮಾಡಲಾಗಿದೆ.

ಯಾದಗಿರಿ ಜಿಲ್ಲೆಯ ಶಹಾಪುರ ಹಾಗೂ ರಾಯಚೂರು ಜಿಲ್ಲೆಯ ದೇವದುರ್ಗದಲ್ಲಿ ತಲಾ 50 ಹಾಸಿಗೆಗಳ ಎಂಸಿಎಚ್ ಆಸ್ಪತ್ರೆ ನಿರ್ಮಾಣಕ್ಕೂ ಸಂಪುಟ ಅನುಮೋದನೆ ನೀಡಿದೆ.

ನೀರಾವರಿ ಹಾಗೂ ಅಭಿವೃದ್ಧಿ ಯೋಜನೆಗಳಿಗೂ ಒಪ್ಪಿಗೆ ದೊರೆತಿದ್ದು, ರಾಯಚೂರು ಜಿಲ್ಲೆಯ ಮಟಮಾರಿ ವೀರಭದ್ರೇಶ್ವರ ಏತ ನೀರಾವರಿ ಯೋಜನೆಗೆ 182.70 ಕೋಟಿ ರೂಪಾಯಿ ಮಂಜೂರು ಮಾಡಲಾಗಿದೆ.

ಮಂಡ್ಯ ಜಿಲ್ಲೆಯ ದಾಸನಕೆರೆ ಅಭಿವೃದ್ಧಿ ಕಾಮಗಾರಿಗಳು, ಮೈಸೂರು ಜಿಲ್ಲೆಯ ಕಬಿನಿ ನದಿಗೆ ವಿಯರ್ ನಿರ್ಮಾಣ, ಜೋಯಿಡಾ ತಾಲೂಕು ಪ್ರಜಾಸೌಧ ಕಟ್ಟಡ ನಿರ್ಮಾಣ ಸೇರಿದಂತೆ ಹಲವು ಅಭಿವೃದ್ಧಿ ಯೋಜನೆಗಳಿಗೆ ಸಚಿವ ಸಂಪುಟ ಗ್ರೀನ್ ಸಿಗ್ನಲ್ ನೀಡಿದೆ.

ಇದಲ್ಲದೆ, ರಾಜ್ಯದ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ 52 ಕ್ರಿಮಿನಲ್ ಪ್ರಕರಣಗಳನ್ನು ಅಭಿಯೋಜನೆಯಿಂದ ಹಿಂಪಡೆಯಲು ಕ್ಯಾಬಿನೆಟ್ ಒಪ್ಪಿಗೆ ಸೂಚಿಸಿದೆ.

ಬೆಂಗಳೂರು ಕೇಂದ್ರ ಕಾರಾಗೃಹದ ಆವರಣದಲ್ಲಿ ಇಂಡಿಯನ್ ಆಯಿಲ್ ಕಾರ್ಪೊರೇಷನ್ ವತಿಯಿಂದ ಪೆಟ್ರೋಲ್ ಬಂಕ್ ಮತ್ತು ಮಾರಾಟ ಮಳಿಗೆ ಸ್ಥಾಪಿಸಲು ಕೂಡ ಸಚಿವ ಸಂಪುಟ ಅನುಮೋದನೆ ನೀಡಿದೆ.

ಕರ್ತವ್ಯದಲ್ಲಿದ್ದ ಬ್ರಿಮ್ಸ್ ವೈದ್ಯನ ಮೇಲೆ ಹಲ್ಲೆ

0

ಬೀದರ್: ತಡರಾತ್ರಿ ಕರ್ತವ್ಯದಲ್ಲಿದ್ದ ಬ್ರಿಮ್ಸ್ ಆಸ್ಪತ್ರೆಯ ವೈದ್ಯರ ಮೇಲೆ ರೋಗಿಯ ಸಂಬಂಧಿಕರು ಹಲ್ಲೆ ನಡೆಸಿದ ಘಟನೆ ಬೀದರ್ ನಗರದಲ್ಲಿ ಆತಂಕಕ್ಕೆ ಕಾರಣವಾಗಿದೆ. ಆಸ್ಪತ್ರೆಯ ಕ್ಯಾಜುವಾಲಿಟಿ ವಾರ್ಡ್‌ನಲ್ಲೇ ನಡೆದ ಈ ಘಟನೆ ವೈದ್ಯಕೀಯ ವಲಯದಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ.

ಮಾಹಿತಿಯ ಪ್ರಕಾರ, ರಾತ್ರಿ ಸುಮಾರು ೧ ಗಂಟೆ ವೇಳೆಗೆ ಇನ್ನೋವಾ ಕಾರಿನಲ್ಲಿ ಬಂದಿದ್ದ ಕೆಲವರು ಕುಡಿದ ಅಮಲಿನಲ್ಲಿ ಕ್ಯಾಜುವಾಲಿಟಿ ವಾರ್ಡ್‌ಗೆ ನುಗ್ಗಿ ಗಲಾಟೆ ನಡೆಸಿದ್ದಾರೆ. ಬಳಿಕ ಕರ್ತವ್ಯದಲ್ಲಿದ್ದ ವೈದ್ಯ ಡಾ. ತುಕರಾಮ ಮಚ್ಚಂದ್ರ ಅವರ ಮೇಲೆ ಏಕಾಏಕಿ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ.

ಹಲ್ಲೆಯಿಂದ ಡಾ. ತುಕರಾಮ ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ. ಆಸ್ಪತ್ರೆಯೊಳಗೆ ಭಯಭೀತ ವಾತಾವರಣ ನಿರ್ಮಾಣವಾಗಿದ್ದು, ಸಿಬ್ಬಂದಿ ಕೆಲಕಾಲ ಆತಂಕಗೊಂಡಿದ್ದರು.

ಈ ಸಂಬಂಧ ಆದಿತ್ಯ, ವಿನೋದ ಚಾಂಚೋಳ, ಗೋವಿಂದ ಬೆನಕನಳ್ಳಿ, ಅನಿಲ ಬೆನಕನಳ್ಳಿ, ಮಹಾದೇವ ಬೆನಕನಳ್ಳಿ, ಬಾಲಾಜಿ ತಾಜಲಾಪೂರ, ಪವನ ಚಾಂಬೋಳ ಸೇರಿದಂತೆ ಇತರರ ವಿರುದ್ಧ ದೂರು ದಾಖಲಾಗಿದೆ.

ಘಟನೆ ಕುರಿತು ಬೀದರ್ ನಗರದ ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

error: Content is protected !!