Home Blog

ಶವವಾಹನ ಬಾಡಿಗೆ ಇಳಿಕೆಗೆ ಸಾರ್ವಜನಿಕರ ಆಗ್ರಹ

0

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಪಟ್ಟಣದ ಪುರಸಭೆ ಹೊಸದಾಗಿ ಖರೀದಿಸಿರುವ ಶವವಾಹನ (ಮುಕ್ತಿವಾಹಿನಿ) ಸೇವೆಗೆ ನಿಗದಿಪಡಿಸಿರುವ ₹2,000 ಬಾಡಿಗೆ ಶುಲ್ಕವನ್ನು ಕಡಿಮೆ ಮಾಡಿ ₹500ಕ್ಕೆ ನಿಗದಿಪಡಿಸಬೇಕು ಎಂದು ಸಾರ್ವಜನಿಕರು ಮಂಗಳವಾರ ಪುರಸಭೆ ಮುಖ್ಯಾಧಿಕಾರಿಗೆ ಮನವಿ ಸಲ್ಲಿಸಿದರು.

ಮನವಿ ಸಲ್ಲಿಸಿದ ಬಳಿಕ ಮಾತನಾಡಿದ ನಾಗರಾಜ ಚಿಂಚಲಿ, ಈ ಹಿಂದೆ ಬಳಕೆಯಲ್ಲಿದ್ದ ಶವವಾಹನ ಸಂಪೂರ್ಣ ಶಿಥಿಲಗೊಂಡಿದ್ದರಿಂದ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗುತ್ತಿತ್ತು. ಹೊಸ ವಾಹನ ಖರೀದಿಸಿರುವುದು ಸ್ವಾಗತಾರ್ಹ ಕ್ರಮವಾದರೂ, ಏಕಾಏಕಿ ₹2,000 ಸೇವಾ ಶುಲ್ಕ ನಿಗದಿಪಡಿಸಿರುವುದು ಬಡ ಹಾಗೂ ಮಧ್ಯಮ ವರ್ಗದ ಕುಟುಂಬಗಳಿಗೆ ಭಾರವಾಗಲಿದೆ ಎಂದು ಹೇಳಿದರು.

ಜನಸಾಮಾನ್ಯರ ಆರ್ಥಿಕ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಶವವಾಹನದ ಬಾಡಿಗೆ ದರವನ್ನು ₹500ಕ್ಕೆ ನಿಗದಿಪಡಿಸಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕು ಎಂದು ಅವರು ಆಗ್ರಹಿಸಿದರು.

ಮನವಿ ಸ್ವೀಕರಿಸಿದ ಪುರಸಭೆ ವ್ಯವಸ್ಥಾಪಕಿ ಮಂಜುಳಾ ಹೂಗಾರ, ಈ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಯಲ್ಲಪ್ಪ ಜಾಲಗಾರ, ಬಸವರಾಜ ದೊಡ್ಡಮನಿ, ಶಿವಣ್ಣ ಕಟಗಿ, ಸದಾನಂದ ನಂದೆಣ್ಣವರ, ಪ್ರಕಾಶ ಕೊಂಚಿಗೇರಿಮಠ, ಟಾಕಪ್ಪ ಸಾತಪೂತೆ, ಎಂ.ಆರ್. ಪಾಟೀಲ, ಅಪ್ಪಣ್ಣ ಮುಳಗುಂದ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಎಸ್‌ಐಆರ್ ಯಶಸ್ಸಿಗೆ ಸಾರ್ವಜನಿಕರ ಸಹಕಾರ ಅಗತ್ಯ: ಸಿ.ಆರ್. ಮುಂಡರಗಿ

0

ವಿಜಯಸಾಕ್ಷಿ ಸುದ್ದಿ, ಗದಗ: ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ-2026 (ಎಸ್‌ಐಆರ್) ಕುರಿತು ಯಾವುದೇ ಊಹಾಪೋಹಗಳಿಗೆ ಕಿವಿಗೊಡದೆ, ಚುನಾವಣಾ ಆಯೋಗದ ವೇಳಾಪಟ್ಟಿಯಂತೆ ಬಿಎಲ್‌ಒಗಳಿಗೆ ಸಮರ್ಪಕ ಮಾಹಿತಿ ನೀಡಿ ಪ್ರಕ್ರಿಯೆಗೆ ಸಹಕರಿಸಬೇಕು. ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಪಾರದರ್ಶಕ ಹಾಗೂ ನಿಖರ ಮತದಾರರ ಪಟ್ಟಿಯನ್ನು ಸಿದ್ಧಪಡಿಸುವುದೇ ಈ ವಿಶೇಷ ಪರಿಷ್ಕರಣೆಯ ಉದ್ದೇಶವಾಗಿದೆ ಎಂದು ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಸಿ.ಆರ್. ಮುಂಡರಗಿ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಸ್ವೀಪ್ ಸಮಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಸಂಯುಕ್ತಾಶ್ರಯದಲ್ಲಿ ನರಸಾಪುರ ಕೈಗಾರಿಕಾ ವಸಾಹತು ಆವರಣದಲ್ಲಿ ಮಂಗಳವಾರ ಆಯೋಜಿಸಿದ್ದ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ-2026 (ಎಸ್‌ಐಆರ್) ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಪ್ರಜಾಪ್ರಭುತ್ವದ ಸದೃಢತೆಗೆ ನಿಖರ ಮತದಾರರ ಪಟ್ಟಿ ಅತ್ಯಂತ ಅವಶ್ಯಕವಾಗಿದೆ. ಈ ಹಿನ್ನೆಲೆಯಲ್ಲಿ ಮತದಾರರ ಪಟ್ಟಿಯನ್ನು ಸಂಪೂರ್ಣವಾಗಿ ಹೊಸದಾಗಿ ಸಿದ್ಧಪಡಿಸುವ ಪ್ರಕ್ರಿಯೆ ನಡೆಯುತ್ತಿದ್ದು, ಈ ಹಿಂದೆ ಪಟ್ಟಿಯಲ್ಲಿದ್ದ ಮತದಾರರು ಈಗಲೂ ಅದೇ ಸ್ಥಳದಲ್ಲಿದ್ದಾರೆಯೇ, ಹೊಸದಾಗಿ ಸೇರ್ಪಡೆಯಾಗಬೇಕಾದವರು ಯಾರು ಎಂಬುದನ್ನು ಗುರುತಿಸಿ ದೃಢೀಕರಿಸುವ ಉದ್ದೇಶದಿಂದ ಎಸ್‌ಐಆರ್-2026 ಕಾರ್ಯ ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಹಾಯಕ ಕಾನೂನು ಅಭಿರಕ್ಷಕ ಗುರುರಾಜ ಬಿ. ಗೌರಿ ತಿಳಿಸಿದರು.

ಬಿಎಲ್‌ಒಗಳು ಮನೆ-ಮನೆಗೆ ಭೇಟಿ ನೀಡಿದಾಗ ಸಾರ್ವಜನಿಕರು ಅಗತ್ಯ ದಾಖಲೆಗಳನ್ನು ನೀಡಿ ಸೂಕ್ತ ನಮೂನೆಗಳನ್ನು ಭರ್ತಿ ಮಾಡಿಕೊಡಬೇಕು. ಇದರಿಂದ ನಿಖರ ಮತದಾರರ ಪಟ್ಟಿ ಸಿದ್ಧಪಡಿಸಲು ಅನುಕೂಲವಾಗುತ್ತದೆ. ಪ್ರತಿಯೊಬ್ಬ ಅರ್ಹ ನಾಗರಿಕರು ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗಿರುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಪ್ರಾಂಶುಪಾಲ ಡಾ. ಶಿವಪ್ಪ ಮರಿಬಸಪ್ಪ ಕುರಿ ಮಾತನಾಡಿ, ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ-2026ರ ಮಹತ್ವವನ್ನು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಅರಿತುಕೊಂಡು ಚುನಾವಣಾ ಆಯೋಗದ ಕಾರ್ಯಕ್ಕೆ ಸಹಕರಿಸಬೇಕು ಎಂದು ಹೇಳಿದರು.

ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಸಹಾಯಕ ಪ್ರಾಧ್ಯಾಪಕ ಡಾ. ಪಿ.ಎಚ್. ಕ್ಯಾರಕೊಪ್ಪ ಸ್ವಾಗತಿಸಿದರು. ಐಕ್ಯೂಎಸಿ ಸಂಚಾಲಕ ಖಲೀಲ್ ಅಹ್ಮದ್ ಚಿಕ್ಕೇರೂರ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಸಹಾಯಕ ಪ್ರಾಧ್ಯಾಪಕ ಮಲಪ್ಪ ಹೊಸೂರು ಕಾರ್ಯಕ್ರಮ ನಿರೂಪಿಸಿ, ಡಾ. ಮಹಾದೇವ ವಡೇಕಾರ ವಂದಿಸಿದರು.

ಬರಪೀಡಿತ ಜಿಲ್ಲೆಯನ್ನಾಗಿ ಘೋಷಿಸಲು ರೈತ ಸಂಘ ಒತ್ತಾಯ

ವಿಜಯಸಾಕ್ಷಿ ಸುದ್ದಿ, ಗದಗ: ಜಿಲ್ಲೆಯಲ್ಲಿ ಭೀಕರ ಬರಗಾಲದಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದು, ಬೆಳೆ ನಷ್ಟಕ್ಕೊಳಗಾದ ಪ್ರತಿ ಎಕರೆಗೆ ₹50 ಸಾವಿರ ಪರಿಹಾರ ನೀಡಬೇಕು. ಜಿಲ್ಲೆಯನ್ನು ತಕ್ಷಣವೇ ಬರಪೀಡಿತ ಎಂದು ಘೋಷಿಸಬೇಕು. ಇಲ್ಲವಾದರೆ ಜಿಲ್ಲೆಯಾದ್ಯಂತ ಹೋರಾಟ ನಡೆಸಿ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ಹಮ್ಮಿಕೊಳ್ಳಲಾಗುವುದು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾ ಘಟಕದ ಅಧ್ಯಕ್ಷ ಶಂಕರಗೌಡ ಜಾಯನಗೌಡ್ರ ಎಚ್ಚರಿಕೆ ನೀಡಿದರು.

ನಗರದಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬರ ಪರಿಸ್ಥಿತಿ ಕುರಿತು ಜಿಲ್ಲಾಧಿಕಾರಿ ಹಾಗೂ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೂ ಮನವಿ ಸಲ್ಲಿಸಲಾಗಿದ್ದರೂ ಇದುವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಜಿಲ್ಲೆಯ ಹಲವು ಕಡೆ ಮಳೆಮಾಪನ ಯಂತ್ರಗಳು ಕಾರ್ಯನಿರ್ವಹಿಸುತ್ತಿಲ್ಲ. ಇದರಿಂದ ಮಳೆಯ ನಿಖರ ಅಂಕಿಅಂಶಗಳು ಲಭ್ಯವಾಗದೇ ವಾಸ್ತವ ಪರಿಸ್ಥಿತಿ ಸರ್ಕಾರದ ಗಮನಕ್ಕೆ ಬರುತ್ತಿಲ್ಲ ಎಂದು ಆರೋಪಿಸಿದರು.

ಜಿಲ್ಲೆಯನ್ನು ತಕ್ಷಣವೇ ಬರಪೀಡಿತ ಪ್ರದೇಶ ಎಂದು ಘೋಷಿಸಬೇಕು. ರೈತರ ಜಾನುವಾರುಗಳ ರಕ್ಷಣೆಗೆ ಮೇವು ಬ್ಯಾಂಕ್‌ಗಳನ್ನು ಆರಂಭಿಸಬೇಕು. ಕೆರೆ ತುಂಬಿಸುವ ಯೋಜನೆಯನ್ನು ತಕ್ಷಣ ಸಕ್ರಿಯಗೊಳಿಸಬೇಕು. ಕಳೆದ ವರ್ಷ ತಂತ್ರಾಂಶದ ದೋಷದಿಂದ ಬೆಳೆ ವಿಮೆ ಹಾಗೂ ಬೆಳೆ ಪರಿಹಾರ ವಿತರಣೆಯಲ್ಲಿ ಅನೇಕ ರೈತರು ವಂಚಿತರಾಗಿದ್ದಾರೆ. ಈ ಬಾರಿ ಅಂತಹ ಸಮಸ್ಯೆ ಮರುಕಳಿಸದಂತೆ ಸರ್ಕಾರ ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕು ಎಂದು ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಘಟಕದ ಕಾರ್ಯಾಧ್ಯಕ್ಷ ರವಿ ವಗ್ಗನವರ, ಉಪಾಧ್ಯಕ್ಷ ಗಿರೀಶ ಹೊಸಮನಿ, ಕಾರ್ಯದರ್ಶಿ ಈಶ್ವರ ಬಿ. ಗದಗಿನ, ತಾಲ್ಲೂಕು ಘಟಕದ ಪ್ರಧಾನ ಕಾರ್ಯದರ್ಶಿ ಶಂಕರಗೌಡ ಪಾಟೀಲ, ಸಂಚಾಲಕ ಶರಣಪ್ಪ ಕಮ್ಮಾರ, ಕಾರ್ಯದರ್ಶಿ ರೇವಣಸಿದ್ದಪ್ಪ ಬಿಡನಾಳ ಉಪಸ್ಥಿತರಿದ್ದರು.

ಅದ್ದೂರಿ ಸ್ವಾತಂತ್ರ್ಯೋತ್ಸವಕ್ಕೆ ಜಿಲ್ಲಾಡಳಿತ ಸಜ್ಜು

0

ವಿಜಯಸಾಕ್ಷಿ ಸುದ್ದಿ, ಗದಗ: ಆಗಸ್ಟ್ 15ರಂದು ನಡೆಯಲಿರುವ ಸ್ವಾತಂತ್ರ್ಯ ದಿನಾಚರಣೆಯನ್ನು ರಾಷ್ಟ್ರಹಬ್ಬದ ಘನತೆಗೆ ತಕ್ಕಂತೆ ಶಿಷ್ಠಾಚಾರ ಪಾಲನೆಯೊಂದಿಗೆ ಅರ್ಥಪೂರ್ಣವಾಗಿ, ಶಿಸ್ತುಬದ್ಧವಾಗಿ ಹಾಗೂ ಅದ್ದೂರಿಯಾಗಿ ಆಚರಿಸಲು ಎಲ್ಲ ಇಲಾಖೆಗಳು ಸಮನ್ವಯದಿಂದ ಅಗತ್ಯ ಸಿದ್ಧತೆಗಳನ್ನು ಪೂರ್ಣಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಡಳಿತ ಭವನದಲ್ಲಿ ಮಂಗಳವಾರ ನಡೆದ ಸ್ವಾತಂತ್ರ್ಯ ದಿನಾಚರಣೆ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸ್ವಾತಂತ್ರ್ಯ ದಿನಾಚರಣೆ ರಾಷ್ಟ್ರದ ಗೌರವ ಮತ್ತು ಹೆಮ್ಮೆಯ ಸಂಕೇತವಾಗಿದ್ದು, ಕಾರ್ಯಕ್ರಮದ ಪ್ರತಿಯೊಂದು ಹಂತದಲ್ಲೂ ಸರ್ಕಾರದ ಶಿಷ್ಟಾಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಆಹ್ವಾನ ಪತ್ರಿಕೆಗಳ ಮುದ್ರಣ, ಅತಿಥಿಗಳ ಆಸನ ವ್ಯವಸ್ಥೆ, ವೇದಿಕೆ ಸಿದ್ಧತೆ ಸೇರಿದಂತೆ ಎಲ್ಲ ವ್ಯವಸ್ಥೆಗಳು ಯಾವುದೇ ಲೋಪವಾಗದಂತೆ ನಿರ್ವಹಿಸಬೇಕು ಎಂದು ಸೂಚಿಸಿದರು.

ರಾಜ್ಯ ಸರ್ಕಾರದ ಶಿಷ್ಟಾಚಾರ ನಿಯಮಾವಳಿಯಂತೆ ಜನಪ್ರತಿನಿಧಿಗಳು, ಮಾಜಿ ಜನಪ್ರತಿನಿಧಿಗಳು, ಸ್ವಾತಂತ್ರ್ಯ ಹೋರಾಟಗಾರರ ಕುಟುಂಬಸ್ಥರು, ಹಿರಿಯ ನಾಗರಿಕರು, ವಿವಿಧ ಕ್ಷೇತ್ರಗಳ ಗಣ್ಯರು ಹಾಗೂ ಸಾರ್ವಜನಿಕರಿಗೆ ಸಕಾಲದಲ್ಲಿ ಆಹ್ವಾನ ನೀಡಬೇಕು. ಯಾವುದೇ ಅರ್ಹ ವ್ಯಕ್ತಿ ಆಹ್ವಾನದಿಂದ ವಂಚಿತರಾಗದಂತೆ ಅಧಿಕಾರಿಗಳು ವಿಶೇಷ ಕಾಳಜಿ ವಹಿಸಬೇಕು ಎಂದು ತಿಳಿಸಿದರು.

ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಧ್ವಜಾರೋಹಣ, ಗೌರವ ವಂದನೆ, ಪಥಸಂಚಲನ, ಸಾಂಸ್ಕೃತಿಕ ಕಾರ್ಯಕ್ರಮ, ಕುಡಿಯುವ ನೀರು, ಶೌಚಾಲಯ, ವೈದ್ಯಕೀಯ ನೆರವು, ಅಗ್ನಿಶಾಮಕ ವ್ಯವಸ್ಥೆ, ತುರ್ತು ನಿರ್ಗಮನ ಹಾಗೂ ವಾಹನ ನಿಲುಗಡೆ ವ್ಯವಸ್ಥೆ ಸೇರಿದಂತೆ ಎಲ್ಲ ಮೂಲಸೌಲಭ್ಯಗಳನ್ನು ಮುಂಚಿತವಾಗಿಯೇ ಸಿದ್ಧಪಡಿಸುವಂತೆ ಸಂಬಂಧಿಸಿದ ಇಲಾಖೆಗಳಿಗೆ ನಿರ್ದೇಶನ ನೀಡಿದರು.

ನಗರದ ಪ್ರಮುಖ ವೃತ್ತಗಳು, ಸರ್ಕಾರಿ ಕಚೇರಿಗಳು ಹಾಗೂ ರಾಷ್ಟ್ರ ನಾಯಕರ ಪ್ರತಿಮೆಗಳಿರುವ ಸ್ಥಳಗಳ ಸ್ವಚ್ಛತೆಗೆ ಆದ್ಯತೆ ನೀಡಿ, ರಸ್ತೆಗಳನ್ನು ಅಲಂಕರಿಸುವ ಮೂಲಕ ರಾಷ್ಟ್ರಹಬ್ಬಕ್ಕೆ ತಕ್ಕ ವಾತಾವರಣ ನಿರ್ಮಿಸಬೇಕು ಎಂದು ನಗರಸಭೆ ಅಧಿಕಾರಿಗಳಿಗೆ ಸೂಚಿಸಿದರು.

ಶಾಲಾ-ಕಾಲೇಜು ವಿದ್ಯಾರ್ಥಿಗಳು, ಎನ್‌ಸಿಸಿ, ಎನ್‌ಎಸ್‌ಎಸ್, ಸ್ಕೌಟ್ಸ್ ಮತ್ತು ಗೈಡ್ಸ್, ಪೊಲೀಸ್ ಹಾಗೂ ಇತರೆ ತಂಡಗಳ ಪಥಸಂಚಲನದ ಪೂರ್ವಾಭ್ಯಾಸವನ್ನು ನಿಗದಿತ ವೇಳಾಪಟ್ಟಿಯಂತೆ ನಡೆಸಬೇಕು. ಸಂಜೆ ವೇಳೆ ದೇಶಭಕ್ತಿ, ರಾಷ್ಟ್ರೀಯ ಏಕತೆ ಹಾಗೂ ಕನ್ನಡದ ಸಾಂಸ್ಕೃತಿಕ ವೈಭವ ಬಿಂಬಿಸುವ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ತಿಳಿಸಿದರು.

ಸ್ವಾತಂತ್ರ್ಯ ದಿನಾಚರಣೆಯ ವೇಳೆ ವಿದ್ಯುತ್ ಪೂರೈಕೆಯಲ್ಲಿ ಯಾವುದೇ ವ್ಯತ್ಯಯವಾಗದಂತೆ ಹೆಸ್ಕಾಂ ಅಧಿಕಾರಿಗಳು ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕು. ಪರ್ಯಾಯ ವಿದ್ಯುತ್ ವ್ಯವಸ್ಥೆ, ಜನರೇಟರ್, ಧ್ವನಿವರ್ಧಕ ಹಾಗೂ ಬೆಳಕಿನ ವ್ಯವಸ್ಥೆಯನ್ನು ಮುಂಚಿತವಾಗಿ ಪರಿಶೀಲಿಸಿ ಸಿದ್ಧವಾಗಿರಿಸಬೇಕು ಎಂದು ಸೂಚಿಸಿದರು.

ಪೊಲೀಸ್ ಇಲಾಖೆ ಭದ್ರತೆ ಹಾಗೂ ಸಂಚಾರ ನಿಯಂತ್ರಣ, ಆರೋಗ್ಯ ಇಲಾಖೆ ವೈದ್ಯಕೀಯ ತಂಡ ಮತ್ತು ಆಂಬ್ಯುಲೆನ್ಸ್, ಅಗ್ನಿಶಾಮಕ ಇಲಾಖೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು. ಎಲ್ಲ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ ರಾಷ್ಟ್ರೋತ್ಸವವನ್ನು ಯಶಸ್ವಿಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಕರೆ ನೀಡಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್., ಉಪವಿಭಾಗಾಧಿಕಾರಿ ಗಂಗಪ್ಪ ಎಂ., ಡಿವೈಎಸ್‌ಪಿ ವಿದ್ಯಾನಂದ ನಾಯಕ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದು, ಸಿದ್ಧತೆಗಳ ಕುರಿತು ಮಾಹಿತಿ ನೀಡಿದರು.

“ರಾಷ್ಟ್ರಹಬ್ಬದ ಗೌರವಕ್ಕೆ ಧಕ್ಕೆಯಾಗದಂತೆ ಪ್ರತಿಯೊಂದು ವ್ಯವಸ್ಥೆಯನ್ನು ಶಿಷ್ಟಾಚಾರ ಹಾಗೂ ಶಿಸ್ತುಬದ್ಧವಾಗಿ ಪೂರ್ಣಗೊಳಿಸಿ, ಸ್ವಾತಂತ್ರ್ಯ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಬೇಕು.”
ಸಿ.ಎನ್. ಶ್ರೀಧರ್, ಜಿಲ್ಲಾಧಿಕಾರಿ, ಗದಗ

ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ಯೋಜನೆಗಳ ಸದುಪಯೋಗ ಪಡೆದುಕೊಳ್ಳಿ: ಗುರುರಾಜ ಬಳಗಾನೂರ

0

ವಿಜಯಸಾಕ್ಷಿ ಸುದ್ದಿ, ಗದಗ: ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದವರಿಗೆ ಸ್ವಯಂ ಉದ್ಯೋಗ ಆರಂಭಿಸಲು ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ವತಿಯಿಂದ 2026-27ನೇ ಸಾಲಿನ ‘ವಿಪ್ರ ಸ್ವ ಉದ್ಯಮ ನೇರ ಸಾಲ ಯೋಜನೆ’ ಜಾರಿಗೊಳಿಸಲಾಗಿದ್ದು, ಆಗಸ್ಟ್ 31ರವರೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಮಂಡಳಿಯ ನಿರ್ದೇಶಕ ಗುರುರಾಜ ಬಳಗಾನೂರ ತಿಳಿಸಿದರು.

ನಗರದ ಪತ್ರಿಕಾ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗುಡಿಕೈಗಾರಿಕೆ, ಸಣ್ಣ ಕೈಗಾರಿಕೆ, ಹೋಟೆಲ್ (ಕ್ಯಾಟರಿಂಗ್), ಅಂಗಡಿ, ಟೈಲರಿಂಗ್, ಟ್ಯಾಕ್ಸಿ ಹಾಗೂ ಹಸು ಸಾಕಾಣಿಕೆಯಂತಹ ಸ್ವಯಂ ಉದ್ಯೋಗ ಕೈಗೊಳ್ಳಲು ಯೋಜನೆಯಡಿ ಆರ್ಥಿಕ ನೆರವು ನೀಡಲಾಗುವುದು. ಅರ್ಹ ಫಲಾನುಭವಿಗಳು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕರೆ ನೀಡಿದರು.

2025-26ನೇ ಸಾಲಿನಲ್ಲಿ ಬ್ರಾಹ್ಮಣ ಅಭಿವೃದ್ಧಿ ಮಂಡಳಿಗೆ ರಾಜ್ಯ ಸರ್ಕಾರ ₹25 ಕೋಟಿ ಅನುದಾನ ಬಿಡುಗಡೆ ಮಾಡಿದ್ದು, ಅದರಲ್ಲಿ ₹20 ಕೋಟಿ ವೆಚ್ಚ ಮಾಡಿ ವಿವಿಧ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗಿದೆ. ‘ವಿಶ್ವಾಮಿತ್ರ ಪ್ರತಿಭಾ ಪುರಸ್ಕಾರ’ ಯೋಜನೆಯಡಿ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ₹15 ಸಾವಿರ ಪ್ರೋತ್ಸಾಹಧನ ನೀಡಲಾಗುತ್ತಿದೆ ಎಂದು ಹೇಳಿದರು.

ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ನೋಂದಾಯಿತ ಸಂಸ್ಥೆಗಳಲ್ಲಿ ತರಬೇತಿ ಪಡೆಯುವ ಅಭ್ಯರ್ಥಿಗಳಿಗೆ ವಾರ್ಷಿಕ ₹1 ಲಕ್ಷ ಸಹಾಯಧನ ನೀಡುವ ಯೋಜನೆಯೂ ಜಾರಿಯಲ್ಲಿದೆ. ಬ್ರಾಹ್ಮಣ ಅಭಿವೃದ್ಧಿ ಮಂಡಳಿಗೆ ಕನಿಷ್ಠ ₹100 ಕೋಟಿ ಅನುದಾನ ನೀಡುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಮನವಿ ಮಾಡಲಾಗಿದ್ದು, ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಕಿತ್ತೂರು ಕರ್ನಾಟಕ ಭಾಗದ ಬ್ರಾಹ್ಮಣ ಸಮುದಾಯದವರು ಸರ್ಕಾರದ ಯೋಜನೆಗಳ ಪ್ರಯೋಜನವನ್ನು ಹೆಚ್ಚಿನ ಪ್ರಮಾಣದಲ್ಲಿ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದರು.

ಯೋಜನೆಗೆ ಅರ್ಜಿ ಸಲ್ಲಿಸಲು ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು. ಬ್ರಾಹ್ಮಣ ಸಮುದಾಯದ ಸಾಮಾನ್ಯ ವರ್ಗಕ್ಕೆ ಸೇರಿದ ಆರ್ಥಿಕವಾಗಿ ಹಿಂದುಳಿದ ಪ್ರಮಾಣಪತ್ರ ಹೊಂದಿರಬೇಕು. ವಯಸ್ಸು 18ರಿಂದ 65 ವರ್ಷದೊಳಗಿರಬೇಕು. ಒಂದು ಕುಟುಂಬದಿಂದ ಒಬ್ಬರಿಗೆ ಮಾತ್ರ ಅವಕಾಶವಿದ್ದು, ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶವಿಲ್ಲ. ಸಾಲದ ಉದ್ದೇಶವನ್ನು ಆನ್‌ಲೈನ್ ಅರ್ಜಿಯಲ್ಲಿ ಸ್ಪಷ್ಟವಾಗಿ ನಮೂದಿಸಬೇಕು. ಅರ್ಜಿದಾರರ ಆಧಾರ್‌ಗೆ ಮೊಬೈಲ್ ಸಂಖ್ಯೆ ಲಿಂಕ್ ಆಗಿದ್ದು, ಬ್ಯಾಂಕ್ ಖಾತೆ ಎನ್‌ಪಿಸಿಐ ಸೀಡ್ ಆಗಿರಬೇಕು ಎಂದು ವಿವರಿಸಿದರು.

ಈ ಸಂದರ್ಭದಲ್ಲಿ ಬ್ರಾಹ್ಮಣ ಸಂಘದ ಜಿಲ್ಲಾಧ್ಯಕ್ಷ ವೆಂಕಟೇಶ್ ಕುಲಕರ್ಣಿ, ಅನಿಲ ತೆಂಬದಮನಿ, ಕೃಷ್ಣಜಿ ನಾಡಗೇರ, ನಾಗರಾಜ ಕುಲಕರ್ಣಿ, ಕಿರಣ್ ಪೂಜಾರ, ಮೇಘಾ ಮುದಗಲ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಹಂಪಾಪಟ್ಟಣಕ್ಕೆ ಸರ್ಕಾರಿ ಪಿಯು ಕಾಲೇಜಿಗೆ ಆಗ್ರಹ

0

ವಿಜಯಸಾಕ್ಷಿ ಸುದ್ದಿ, ಹಗರಿಬೊಮ್ಮನಹಳ್ಳಿ: ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ಹಂಪಾಪಟ್ಟಣ ಗ್ರಾಮಕ್ಕೆ ಸರ್ಕಾರಿ ಪದವಿ ಪೂರ್ವ (ಪಿಯು) ಕಾಲೇಜು ಮಂಜೂರು ಮಾಡುವಂತೆ ಆಗ್ರಹಿಸಿ ಗ್ರಾಮಸ್ಥರು, ರೈತ ಸಂಘದ ಮುಖಂಡರು ಹಾಗೂ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಪಕ್ಷಾತೀತವಾಗಿ ಹೋರಾಟ ಆರಂಭಿಸಿ ಸೋಮವಾರ ತಹಶೀಲ್ದಾರರ ಮೂಲಕ ರಾಜ್ಯ ಸರ್ಕಾರಕ್ಕೆ ಸಾಂಕೇತಿಕ ಮನವಿ ಸಲ್ಲಿಸಿದರು.

ಹೋರಾಟ ಸಮಿತಿಯ ಸಂಚಾಲಕ ಬುಡ್ಡಿ ಬಸವರಾಜ್ ಮಾತನಾಡಿ, “ಹಂಪಾಪಟ್ಟಣ ಸೇರಿದಂತೆ ಸುತ್ತಮುತ್ತಲಿನ 12 ಗ್ರಾಮಗಳ ವಿದ್ಯಾರ್ಥಿಗಳು ಉನ್ನತ ಶಿಕ್ಷಣಕ್ಕಾಗಿ ದೂರದ ಊರುಗಳಿಗೆ ತೆರಳಬೇಕಾದ ಅನಿವಾರ್ಯತೆ ಎದುರಿಸುತ್ತಿದ್ದಾರೆ. ಇದರಿಂದ ಬಡ ಹಾಗೂ ರೈತ ಕುಟುಂಬಗಳ ವಿದ್ಯಾರ್ಥಿಗಳ ಶಿಕ್ಷಣಕ್ಕೆ ತೊಂದರೆಯಾಗುತ್ತಿದೆ. ಸರ್ಕಾರ ತಕ್ಷಣವೇ ಹಂಪಾಪಟ್ಟಣದಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜು ಮಂಜೂರು ಮಾಡಿ ಗ್ರಾಮೀಣ ವಿದ್ಯಾರ್ಥಿಗಳ ಭವಿಷ್ಯಕ್ಕೆ ಭದ್ರ ಬುನಾದಿ ಹಾಕಬೇಕು” ಎಂದು ಒತ್ತಾಯಿಸಿದರು.

ರೈತ ಸಂಘದ ಮುಖಂಡ ಬಿ. ಕುಬೇರ ಮಾತನಾಡಿ, ರೈತ ಕುಟುಂಬಗಳ ಮಕ್ಕಳಿಗೆ ಗುಣಮಟ್ಟದ ಉನ್ನತ ಶಿಕ್ಷಣ ದೊರೆಯುವ ನಿಟ್ಟಿನಲ್ಲಿ ಸರ್ಕಾರ ಈ ಬೇಡಿಕೆಯನ್ನು ಗಂಭೀರವಾಗಿ ಪರಿಗಣಿಸಿ ಶೀಘ್ರದಲ್ಲೇ ಸರ್ಕಾರಿ ಪಿಯು ಕಾಲೇಜು ಮಂಜೂರು ಮಾಡಬೇಕು ಎಂದು ಆಗ್ರಹಿಸಿದರು.

ಯುವ ಮುಖಂಡ ಟಿ. ಕೊಟ್ರೇಶ್ ಮಾತನಾಡಿ, ಹಂಪಾಪಟ್ಟಣ ಹಾಗೂ ಸುತ್ತಮುತ್ತಲಿನ ಗ್ರಾಮಗಳ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಪಕ್ಷಾತೀತವಾಗಿ ಈ ಹೋರಾಟ ಆರಂಭಿಸಲಾಗಿದೆ. ವಿದ್ಯಾರ್ಥಿಗಳ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ ಕೂಡಲೇ ಕಾಲೇಜು ಮಂಜೂರು ಮಾಡಬೇಕು ಎಂದು ಒತ್ತಾಯಿಸಿದರು.

ಗ್ರಾಮ ಪಂಚಾಯಿತಿ ಸದಸ್ಯ ಎನ್. ನಾಗರಾಜ್ ಮಾತನಾಡಿ, ಹಂಪಾಪಟ್ಟಣದಲ್ಲಿ ಪದವಿ ಪೂರ್ವ ಕಾಲೇಜು ಆರಂಭಿಸಲು ಅಗತ್ಯ ಮೂಲಸೌಕರ್ಯಗಳಿದ್ದು, ಕಾಲೇಜು ಮಂಜೂರಾದರೆ ಸಾವಿರಾರು ಗ್ರಾಮೀಣ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ ಎಂದು ತಿಳಿಸಿದರು.

ಬಳಿಕ ತಹಶೀಲ್ದಾರರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರಾದ ಸಿ.ಎಲ್. ಕುಮಾರ್, ಸಿದ್ದರ ಗಾಳಪ್ಪ, ಬಿ. ನಾಗರಾಜ್, ಪತ್ರಿ ಯಲ್ಲಪ್ಪ, ಗಾಳಮ್ಮನವರ ಹುಲುಗಪ್ಪ, ಭಜಂತ್ರಿ ಸೋಮನಾಥ್, ಜಿ. ಅಂಜಿನಪ್ಪ, ಶಿಗೇನಹಳ್ಳಿ ಬಸವರಾಜ್, ಬೆಸ್ತರು ಮಂಜುನಾಥ್, ಎಚ್.ಕೆ. ರಮೇಶ್, ತೀರ್ಥ ಪ್ರಸಾದ್, ಹಂಪಿನಕಟ್ಟಿ ಪ್ರವೀಣ್, ಉಪ್ಪಾರ್ ಹನುಮಂತಪ್ಪ, ಗೊಂದಲಿ ಪಕೀರಪ್ಪ, ಸಿದ್ದರ ಎಲ್ಲಪ್ಪ, ಎಚ್. ಅಶೋಕ್, ಕೆ. ನಜೀರ್ ಸಾಬ್, ವಡ್ಡರ ಹಾಲಪ್ಪ, ವಜೀರ್, ಬಿ.ಕೆ. ಬಸವರಾಜ್, ಕುಮಾರ್ ಮೊದಲಿಯಾರ್, ನಾಗೇಶ್, ಬಸವರಾಜ್, ನಿಂಗರಾಜ್ ಅಂಜಿನಿ ಸೇರಿದಂತೆ ಗ್ರಾಮಸ್ಥರು, ರೈತ ಸಂಘದ ಪದಾಧಿಕಾರಿಗಳು ಹಾಗೂ ವಿವಿಧ ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದರು.

ಶಿಕ್ಷಣವೇ ಸಮಾಜದ ಅಭಿವೃದ್ಧಿಗೆ ಅಡಿಪಾಯ: ಶಾಸಕ ನೇಮಿರಾಜ್ ನಾಯ್ಕ್

0

ವಿಜಯಸಾಕ್ಷಿ ಸುದ್ದಿ, ಹಗರಿಬೊಮ್ಮನಹಳ್ಳಿ: ತಾಲೂಕಿನ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಮಾದಿಗ ಸಮಾಜದ ವತಿಯಿಂದ ಭಾನುವಾರ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭ ಆಯೋಜಿಸಿ, ವಿವಿಧ ಪರೀಕ್ಷೆಗಳಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ನೇಮಿರಾಜ್ ನಾಯ್ಕ್, “ಮಕ್ಕಳು ಶಿಕ್ಷಣದ ಜೊತೆಗೆ ಸಂಸ್ಕಾರವನ್ನೂ ರೂಢಿಸಿಕೊಳ್ಳಬೇಕು. ಪೋಷಕರು ತಮ್ಮ ಸುಖವನ್ನು ತ್ಯಾಗ ಮಾಡಿ ಮಕ್ಕಳ ಶಿಕ್ಷಣಕ್ಕಾಗಿ ಶ್ರಮಿಸುತ್ತಾರೆ. ವಿದ್ಯಾವಂತರಾಗಿ ಉನ್ನತ ಹುದ್ದೆ ಸೇರಿದ ಬಳಿಕ ಹೆತ್ತ ತಂದೆ-ತಾಯಿಯನ್ನು ಮರೆಯದೆ ಅವರ ಸೇವೆ ಮಾಡುವುದು ಪ್ರತಿಯೊಬ್ಬರ ಕರ್ತವ್ಯ. ಉತ್ತಮ ಸಂಸ್ಕಾರ, ಶಿಸ್ತು ಹಾಗೂ ಹಿರಿಯರಿಗೆ ಗೌರವ ನೀಡುವ ಗುಣಗಳನ್ನು ಬೆಳೆಸಿಕೊಳ್ಳಬೇಕು” ಎಂದು ಕಿವಿಮಾತು ಹೇಳಿದರು.

ಸಾನ್ನಿಧ್ಯ ವಹಿಸಿದ್ದ ಗದುಗಿನ ತೋಟದಾರ್ಯ ಶಾಖಾಮಠದ ಬಾಚಿಗೊಂಡನಹಳ್ಳಿಯ ಶ್ರೀ ಶಿವ ಮಹಾಂತ ಮಹಾಸ್ವಾಮಿಗಳು ಹಾಗೂ ಕಡಲಬಾಳಿನ ಶ್ರೀ ಗವಿಸಿದ್ದೇಶ್ವರ ಶಾಖಾಮಠದ ಶ್ರೀ ಮರಿ ಶಾಂತವೀರ ಮಹಾಸ್ವಾಮಿಗಳು ಆಶೀರ್ವಚನ ನೀಡಿ, ಶಿಕ್ಷಣದ ಮೂಲಕ ಸಮಾಜದ ಪ್ರಗತಿ ಸಾಧ್ಯ ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಂಗ್ರೆಸ್ ಮುಖಂಡ ಹೆಗ್ಡಾಳ್ ರಾಮಣ್ಣ ಮಾತನಾಡಿ, ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗೌರವಿಸುವ ಇಂತಹ ಕಾರ್ಯಕ್ರಮಗಳು ಮಕ್ಕಳಲ್ಲಿ ಇನ್ನಷ್ಟು ಸಾಧಿಸುವ ಉತ್ಸಾಹ ತುಂಬುತ್ತವೆ. ಪೋಷಕರು ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರವನ್ನೂ ನೀಡಬೇಕು ಎಂದು ಹೇಳಿದರು.

ಸಮಾಜದ ಹಿರಿಯ ಬಲ್ಲಾಹುಣ್ಸೆ ರಾಮಣ್ಣ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಸಮಾಜದಲ್ಲಿ ಶಿಕ್ಷಣದ ಬಗ್ಗೆ ಜಾಗೃತಿ ಹೆಚ್ಚುತ್ತಿರುವುದು ಸಂತಸದ ಸಂಗತಿ. ಪೋಷಕರು ಕಾಣುವ ಕನಸನ್ನು ನನಸಾಗಿಸುವ ಹೊಣೆ ಮಕ್ಕಳ ಮೇಲಿದೆ ಎಂದು ತಿಳಿಸಿದರು.

ದಲಿತ ಸಂಘರ್ಷ ಸಮಿತಿಯ ಸಂಚಾಲಕ ದುರುಗೇಶ್ ಮಾತನಾಡಿ, ಹಲವು ದಶಕಗಳ ಹೋರಾಟದಿಂದ ದೊರೆತಿರುವ ಮೀಸಲಾತಿಯ ಸೌಲಭ್ಯವನ್ನು ಸಮಾಜದ ಮಕ್ಕಳು ಶಿಕ್ಷಣದ ಮೂಲಕ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಕರೆ ನೀಡಿದರು.

ಹೂವಿನಹಡಗಲಿಯ ದಲಿತ ಮುಖಂಡ ಉಚ್ಚಂಗೆಪ್ಪ ಮಾತನಾಡಿ, ಸಮಾಜದಲ್ಲಿ ಶಿಕ್ಷಣದ ಅರಿವು ಹೆಚ್ಚುತ್ತಿರುವುದು ಆಶಾದಾಯಕ ಬೆಳವಣಿಗೆ. ಯಾವುದೇ ಕಷ್ಟ ಬಂದರೂ ಮಕ್ಕಳನ್ನು ವಿದ್ಯಾವಂತರನ್ನಾಗಿ ಮಾಡಬೇಕು ಎಂದು ಪೋಷಕರಿಗೆ ಮನವಿ ಮಾಡಿದರು.

ಇದೇ ವೇಳೆ ಪೂಜಪ್ಪ, ಕಂದ್ಗಲ್ ಪರಶುರಾಮ, ಆರ್‌ಟಿಒ ಪರಮೇಶಪ್ಪ ಸೇರಿದಂತೆ ಹಲವರು ಮಾತನಾಡಿ, ಸಮಾಜದ ಅಭಿವೃದ್ಧಿಗೆ ಶಿಕ್ಷಣವೇ ಪ್ರಮುಖ ಅಸ್ತ್ರವಾಗಿದ್ದು, ಪ್ರತಿಯೊಬ್ಬ ವಿದ್ಯಾರ್ಥಿಯೂ ಉನ್ನತ ಶಿಕ್ಷಣ ಪಡೆದು ಸಮಾಜಕ್ಕೆ ಮಾದರಿಯಾಗಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಹೆಗ್ಡಾಳ್ ಪರಶುರಾಮ, ಕಲ್ಲಳ್ಳಿ ನಾಗರಾಜ್, ಅಡವಿ ಆನಂದದೇವನಹಳ್ಳಿಯ ಪ್ರಭಾಕರ್, ಅಲಬೂರು ಮರಿಯಪ್ಪ, ಯಡ್ರಮ್ಮನಹಳ್ಳಿ ಮರಿಯಪ್ಪ, ದುರುಗಪ್ಪ ಕಿತ್ನೂರು, ಉಮೇಶ್ ಕೋಗಳಿ, ಒಂಟಿ ಮೇಘರಾಜ್ ಸೇರಿದಂತೆ ಸಮಾಜದ ಮುಖಂಡರು, ಪೋಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಇಂದಿನ ವಿದ್ಯಾರ್ಥಿಗಳೇ ನಾಳಿನ ಜನಪ್ರತಿನಿಧಿಗಳು: ಎಸ್.ಎಚ್. ಕೊಪ್ಪದ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ: ಪ್ರಜಾಪ್ರಭುತ್ವವು ಕೇವಲ ಮತದಾನಕ್ಕೆ ಸೀಮಿತವಾಗದೆ, ಜವಾಬ್ದಾರಿಯುತ ನಾಯಕತ್ವ, ಸೇವಾ ಮನೋಭಾವ ಹಾಗೂ ಸಾಮಾಜಿಕ ಬದ್ಧತೆಯನ್ನು ಬೆಳೆಸುವ ಜೀವನ ಪದ್ಧತಿಯಾಗಿದೆ. ಇಂತಹ ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ವಿದ್ಯಾರ್ಥಿಗಳಲ್ಲಿ ಬಾಲ್ಯದಿಂದಲೇ ಬೆಳೆಸಲು ಶಾಲಾ ಸಂಸತ್ತಿನ ರಚನೆ ಅತ್ಯಗತ್ಯ ಎಂದು ನಿಡಗುಂದಿಯ ಶ್ರೀ ಅನ್ನದಾನೇಶ್ವರ ಪ್ರೌಢಶಾಲೆಯ ಸ್ಥಾನಿಕ ಆಡಳಿತ ಮಂಡಳಿ ಸದಸ್ಯ ಎಸ್.ಎಚ್. ಕೊಪ್ಪದ ಹೇಳಿದರು.

ಶಾಲೆಯಲ್ಲಿ 2026-27ನೇ ಶೈಕ್ಷಣಿಕ ಸಾಲಿನ ಶಾಲಾ ಸಂಸತ್ ಪದಾಧಿಕಾರಿಗಳ ಆಯ್ಕೆ ಹಾಗೂ ಪ್ರಮಾಣವಚನ ಸ್ವೀಕಾರ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ಭಾರತೀಯ ಸಂಸತ್ತಿನ ಮಾದರಿಯಲ್ಲಿ ಶಾಲಾ ಸಂಸತ್ತಿನ ರಚನೆಯು ವಿದ್ಯಾರ್ಥಿಗಳಲ್ಲಿ ನಾಯಕತ್ವ, ಪ್ರಾಮಾಣಿಕತೆ, ಕರ್ತವ್ಯನಿಷ್ಠೆ, ಸಹಕಾರ ಮನೋಭಾವ ಹಾಗೂ ಸಾರ್ವಜನಿಕ ಸೇವೆಯಂತಹ ಮೌಲ್ಯಗಳನ್ನು ಬೆಳೆಸುವ ಅರ್ಥಪೂರ್ಣ ಹೆಜ್ಜೆಯಾಗಿದೆ. ಇಂದಿನ ವಿದ್ಯಾರ್ಥಿಗಳೇ ನಾಳಿನ ಪ್ರಜೆಗಳು ಮತ್ತು ಜನಪ್ರತಿನಿಧಿಗಳಾಗಲಿದ್ದು, ಶಾಲಾ ಸಂಸತ್ತಿನ ಅನುಭವವು ಅವರ ವ್ಯಕ್ತಿತ್ವ ವಿಕಸನಕ್ಕೆ ಭದ್ರ ಅಡಿಪಾಯವಾಗಲಿದೆ ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಆಡಳಿತ ಮಂಡಳಿಯ ಸ್ಥಾನಿಕ ಅಧ್ಯಕ್ಷ ಜಗದೀಶ ಕರಡಿ ಮಾತನಾಡಿ, ಅಧಿಕಾರವನ್ನು ಪ್ರತಿಷ್ಠೆಯ ಸಂಕೇತವಾಗಿ ಅಲ್ಲ, ಸೇವೆಯ ಸಾಧನವಾಗಿ ಪರಿಗಣಿಸಿ ವಿದ್ಯಾರ್ಥಿ ಪ್ರತಿನಿಧಿಗಳು ಸಹಪಾಠಿಗಳ ಸಮಸ್ಯೆಗಳಿಗೆ ಸ್ಪಂದಿಸಬೇಕು. ಶಿಸ್ತು, ಪ್ರಾಮಾಣಿಕತೆ ಮತ್ತು ಸೇವಾ ಮನೋಭಾವವೇ ಉತ್ತಮ ನಾಯಕತ್ವದ ಗುಣಗಳಾಗಿವೆ ಎಂದು ತಿಳಿಸಿದರು.

ಮುಖ್ಯ ಶಿಕ್ಷಕ ಎಂ.ಬಿ. ಕೊಪ್ಪದ ಮಾತನಾಡಿ, ಶಾಲಾ ಸಂಸತ್ತು ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ, ಸಂಘಟನಾ ಕೌಶಲ್ಯ, ನಿರ್ಧಾರ ಕೈಗೊಳ್ಳುವ ಸಾಮರ್ಥ್ಯ ಹಾಗೂ ತಂಡದೊಂದಿಗೆ ಕಾರ್ಯನಿರ್ವಹಿಸುವ ಗುಣಗಳನ್ನು ಬೆಳೆಸುವ ಪರಿಣಾಮಕಾರಿ ವೇದಿಕೆಯಾಗಿದೆ. ಪ್ರತಿಯೊಬ್ಬರೂ ತಮ್ಮ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿರ್ವಹಿಸಬೇಕು ಎಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ಶಿಕ್ಷಕ ಎಸ್.ವಿ. ಹಳ್ಳಿಕೇರಿ ಶಾಲಾ ಸಂಸತ್ತಿನ ಉದ್ದೇಶ, ರಚನೆ ಹಾಗೂ ವಿವಿಧ ಸಚಿವರ ಕರ್ತವ್ಯಗಳ ಕುರಿತು ಮಾಹಿತಿ ನೀಡಿದರು. ಬಳಿಕ ಶಿಕ್ಷಕ ಜೆ.ಪಿ. ಗೋಂದಳೆ ನೂತನ ಪದಾಧಿಕಾರಿಗಳಿಗೆ ಪ್ರಮಾಣವಚನ ಬೋಧಿಸಿದರು.

2026-27ನೇ ಸಾಲಿನ ಶಾಲಾ ಸಂಸತ್ತಿನ ಪ್ರಧಾನಮಂತ್ರಿಯಾಗಿ ಮಲ್ಲಿಕಾರ್ಜುನ ಗಡಾದ, ಉಪಪ್ರಧಾನಮಂತ್ರಿಯಾಗಿ ಸ್ವಾತಿ ಕಳಕಾಪೂರ ಆಯ್ಕೆಯಾದರು. ವಿವಿಧ ಸಚಿವ ಸ್ಥಾನಗಳಿಗೆ ಅನಿಲ ದೇಸಾಯಿ, ಅಮೃತಾ ಕಂಬಳಿ, ವೀರಭದ್ರ ಗಡಾದ, ಶ್ವೇತಾ ಧರಣೆಪ್ಪಗೌಡ, ಮನೋಜ ಡುಮ್ಮನವರ, ಶಾಹಿನಾ ನದಾಫ್, ಶಾವು ಬಾಣದ, ಲಕ್ಷ್ಮೀ ಕಂಬಳಿ, ಕಂಠೆಪ್ಪ ಕಾಲವಾಡ, ಅನ್ನಪೂರ್ಣ ಗಡಾದ, ವಿನೋದ ದಿವಟರ, ಪ್ರಿಯಾಂಕಾ ಗುರಿಕಾರ, ಅಭಿಷೇಕ ಭೂಸನೂರಮಠ, ವಿಜಯ ಮಠಪತಿ, ಧನರಾಜ ಕರಮುಡಿ ಸೇರಿದಂತೆ ಹಲವು ವಿದ್ಯಾರ್ಥಿಗಳು ಆಯ್ಕೆಯಾದರು.

ಕಾರ್ಯಕ್ರಮದಲ್ಲಿ ಶಿಕ್ಷಕರಾದ ಕೆ.ಬಿ. ಗಡಾದ, ಎಸ್.ಬಿ. ಹಿರೇಮಠ, ನಂದಾ ಮೆಣಸಗಿ, ಪೂಜಾ ಅಂಗಡಿ, ಬಿ.ಪಿ. ಕಾಗಿ, ಚೇತನ್ ಭೂಸನೂರಮಠ, ವೀರಣ್ಣ ಅರಮನಿ ಹಾಗೂ ಸಂತೋಷ ಚಿಲ್ಲಜರಿ ಉಪಸ್ಥಿತರಿದ್ದರು.

ಎಚ್.ಬಿ. ಕಟ್ಟಿಮನಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

“ಶಾಲಾ ಸಂಸತ್ತು ವಿದ್ಯಾರ್ಥಿಗಳಲ್ಲಿ ನಾಯಕತ್ವ, ಜವಾಬ್ದಾರಿ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಬೆಳೆಸುವ ಅತ್ಯುತ್ತಮ ವೇದಿಕೆಯಾಗಿದೆ.”

– ಎಸ್.ಎಚ್. ಕೊಪ್ಪದ, ಸ್ಥಾನಿಕ ಆಡಳಿತ ಮಂಡಳಿ ಸದಸ್ಯರು

ಆಷಾಢದ ಉಡಿ ತುಂಬಿ ದೇವಿಯರ ಕೃಪೆಗೆ ಪ್ರಾರ್ಥನೆ

0

ವಿಜಯಸಾಕ್ಷಿ ಸುದ್ದಿ, ಗದಗ: ಹಿಂದೂ ಸಂಪ್ರದಾಯದಲ್ಲಿ ಕಾರ ಹುಣ್ಣಿಮೆಯನ್ನು ಹಬ್ಬಗಳ ಮುನ್ನುಡಿಯಾಗಿ ಪರಿಗಣಿಸಲಾಗುತ್ತದೆ. ಕಾರ ಹುಣ್ಣಿಮೆ ಯಾವ ವಾರದಂದು ಬರುತ್ತದೆಯೋ, ನಾಗರ ಪಂಚಮಿ, ಗಣೇಶ ಚತುರ್ಥಿ, ವಿಜಯದಶಮಿ ಹಾಗೂ ಬಲಿಪಾಡ್ಯಮಿ ಸೇರಿದಂತೆ ಪ್ರಮುಖ ಹಬ್ಬಗಳೂ ಅದೇ ವಾರದಂದು ಆಚರಿಸಲ್ಪಡುವ ವಿಶೇಷತೆ ಇದೆ.

ಆಷಾಢ ಮಾಸದಲ್ಲಿ ದೇವಿಯರಿಗೆ ಉಡಿ ತುಂಬುವುದು, ಆರತಿ ಬೆಳಗುವುದು ಹಾಗೂ ನೈವೇದ್ಯ ಸಮರ್ಪಿಸುವುದು ಮಹಿಳೆಯರ ಸಂಪ್ರದಾಯವಾಗಿದೆ. ಇದೇ ಹಿನ್ನೆಲೆಯಲ್ಲಿ ಎಸ್‌ಎಸ್‌ಕೆ ಶ್ರೀ ಜಗದಂಬಾ ಮಹಿಳಾ ಮಂಡಳಿ ವತಿಯಿಂದ ಈ ವರ್ಷದ ಆಷಾಢ ಮಾಸದ ಉಡಿ ತುಂಬುವ ಕಾರ್ಯಕ್ರಮವನ್ನು ಭಕ್ತಿಭಾವದಿಂದ ಆಚರಿಸಲಾಯಿತು.

ಜುಲೈ 24ರಂದು ಬೆಳಿಗ್ಗೆ 11 ಗಂಟೆಗೆ ಮಂಡಳಿಯ ಪದಾಧಿಕಾರಿಗಳು ಹಾಗೂ ಸದಸ್ಯೆಯರು ಸರಾಫ್ ಬಜಾರ್ ಅಂಬಾಭವಾನಿ ದೇವಸ್ಥಾನದಲ್ಲಿ ಸೇರಿ ಜಗದಂಬಾ ದೇವಿ, ತುಳಜಾಭವಾನಿ ದೇವಿ, ನವದುರ್ಗಾ ದೇವಿ ಹಾಗೂ ಹುಡ್ಕೋ ಅಂಬಾಭವಾನಿ ದೇವಿಗೆ ಆಷಾಢ ಮಾಸದ ಉಡಿ ತುಂಬಿ ವಿಶೇಷ ಪೂಜೆ ಸಲ್ಲಿಸಿದರು.

ಬಳಿಕ ದೇವಸ್ಥಾನಕ್ಕೆ ಆಗಮಿಸಿದ್ದ ಮಹಿಳೆಯರಿಗೂ ಉಡಿ ತುಂಬಿ ದೇವಿಯ ಆಶೀರ್ವಾದ ಪಡೆಯುವಂತೆ ಮಾಡಿ, ಧಾರ್ಮಿಕ ಸಂಪ್ರದಾಯವನ್ನು ಅರ್ಥಪೂರ್ಣವಾಗಿ ಆಚರಿಸಿದರು. ಕಾರ್ಯಕ್ರಮದಲ್ಲಿ ಮಹಿಳಾ ಮಂಡಳಿಯ ಪದಾಧಿಕಾರಿಗಳು, ಸದಸ್ಯೆಯರು ಹಾಗೂ ಭಕ್ತರು ಭಾಗವಹಿಸಿದ್ದರು.

ಹಗರಿಬೊಮ್ಮನಹಳ್ಳಿ ಬರಪೀಡಿತ ತಾಲೂಕು ಘೋಷಣೆಗೆ ಆಗ್ರಹ

0

ವಿಜಯಸಾಕ್ಷಿ ಸುದ್ದಿ, ಹಗರಿಬೊಮ್ಮನಹಳ್ಳಿ: ಸಕಾಲದಲ್ಲಿ ಸಮರ್ಪಕ ಮಳೆಯಾಗದ ಹಿನ್ನೆಲೆಯಲ್ಲಿ ಬೆಳೆಗಳು ಸಂಪೂರ್ಣ ಹಾನಿಗೊಳಗಾಗಿದ್ದು, ಹಗರಿಬೊಮ್ಮನಹಳ್ಳಿ ತಾಲೂಕನ್ನು ತಕ್ಷಣವೇ ಬರಪೀಡಿತ ಪ್ರದೇಶವೆಂದು ಘೋಷಿಸಬೇಕು. ಬೆಳೆ ನಷ್ಟಕ್ಕೆ ಎಕರೆಗೆ ₹30 ಸಾವಿರ ಪರಿಹಾರ ನೀಡುವುದರ ಜೊತೆಗೆ ರೈತರ ಕೃಷಿ ಸಾಲವನ್ನು ಸಂಪೂರ್ಣ ಮನ್ನಾ ಮಾಡಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಆಗ್ರಹಿಸಿದೆ.

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷ ಸಿ.ಎ. ಗಾಳೆಪ್ಪ ಅವರ ನಿರ್ದೇಶನದ ಮೇರೆಗೆ ಸಂಘದ ಪದಾಧಿಕಾರಿಗಳು ಸೋಮವಾರ ಪಟ್ಟಣದ ತಾಲೂಕು ಮಿನಿ ವಿಧಾನಸೌಧದಲ್ಲಿ ಉಪ ತಹಸೀಲ್ದಾರ್ ಶಿವಕುಮಾರ ಗೌಡ ಅವರಿಗೆ ಮನವಿ ಸಲ್ಲಿಸಿದರು.

ಈ ವೇಳೆ ಮಾತನಾಡಿದ ತಾಲೂಕು ಅಧ್ಯಕ್ಷ ಜಿ. ರಮೇಶ್, ತಾಲೂಕಿನಲ್ಲಿ ಸಮರ್ಪಕ ಮಳೆಯಾಗದ ಕಾರಣ ರೈತರು ಬಿತ್ತನೆಗೆ ಖರ್ಚು ಮಾಡಿದ ಬೀಜ, ಗೊಬ್ಬರ ಸೇರಿದಂತೆ ಕೃಷಿ ಹೂಡಿಕೆ ಸಂಪೂರ್ಣ ನಷ್ಟವಾಗಿದೆ. ಇದರಿಂದ ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿ ಆತಂಕದ ಸ್ಥಿತಿಯಲ್ಲಿದ್ದು, ಕೆಲವರು ಆತ್ಮಹತ್ಯೆಯಂತಹ ದುಃಸ್ಥಿತಿಯತ್ತ ತಳ್ಳಲ್ಪಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಕಳವಳ ವ್ಯಕ್ತಪಡಿಸಿದರು.

ಆದ್ದರಿಂದ ಸರ್ಕಾರ ಕೂಡಲೇ ಹಗರಿಬೊಮ್ಮನಹಳ್ಳಿ ತಾಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿ, ರೈತರಿಗೆ ಎಕರೆಗೆ ₹30 ಸಾವಿರ ಬೆಳೆ ನಷ್ಟ ಪರಿಹಾರ ನೀಡಬೇಕು ಹಾಗೂ ಎಲ್ಲಾ ಕೃಷಿ ಸಾಲಗಳನ್ನು ಮನ್ನಾ ಮಾಡಬೇಕು ಎಂದು ಒತ್ತಾಯಿಸಿದರು.

ಸರ್ಕಾರ ಮನವಿಗೆ ಸ್ಪಂದಿಸದಿದ್ದರೆ ಮುಂದಿನ ದಿನಗಳಲ್ಲಿ ತಾಲೂಕು ಮಟ್ಟದಲ್ಲಿ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು.

ಮನವಿ ಸಲ್ಲಿಸುವ ಸಂದರ್ಭದಲ್ಲಿ ತಾಲೂಕು ಗೌರವಾಧ್ಯಕ್ಷ ಎಚ್. ದುರಗಪ್ಪ, ಹೋಬಳಿ ಅಧ್ಯಕ್ಷ ಮಲ್ಲಿಕಾರ್ಜುನಗೌಡ್ರು, ಹೋಬಳಿ ಉಪಾಧ್ಯಕ್ಷ ಎಚ್.ಐ. ಪರಶುರಾಮ, ಗ್ರಾಮ ಘಟಕ ಅಧ್ಯಕ್ಷ ಎಚ್.ಡಿ. ಮೈಲಾರಿ, ಪದಾಧಿಕಾರಿಗಳಾದ ಎಚ್. ರುದ್ರಗೌಡ, ಕೆ.ಎಂ. ಕೊಟ್ರಯ್ಯ, ಎಂ. ಮೈಲಾರಪ್ಪ, ಪಿ. ಮಲ್ಲಪ್ಪ, ರಾಮಪ್ಪ, ಪಿ. ದುರಗಪ್ಪ, ಈರಣ್ಣ ಮುದಿಯಪ್ಪ, ಬಿ. ಹಾಲಪ್ಪ, ಕೃಷ್ಣಾರೆಡ್ಡಿ, ಮಾರುತಿ ಚಿಗರಿ, ರಾಮಚಂದ್ರ ಸೇರಿದಂತೆ ರೈತ ಸಂಘದ ಮುಖಂಡರು ಹಾಗೂ ವಿವಿಧ ಗ್ರಾಮಗಳ ರೈತರು ಉಪಸ್ಥಿತರಿದ್ದರು.