Home Blog

ರಾಜ್ಯಾದ್ಯಂತ ಬಿರುಗಾಳಿ ಸಹಿತ ಭಾರಿ ಮಳೆ: ಮರಗಳು ಉರುಳಿ ಜನಜೀವನ ಅಸ್ತವ್ಯಸ್ತ

ಬೆಳಗಾವಿ: ಬೆಳಗಾವಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಂಗಳವಾರ ಬಿರುಗಾಳಿ ಸಹಿತ ಭಾರಿ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.

ಬಿರುಗಾಳಿಯ ಅಬ್ಬರಕ್ಕೆ ಬೃಹತ್ ಮರಗಳು ಹಾಗೂ ವಿದ್ಯುತ್ ಕಂಬಗಳು ನೆಲಕ್ಕುರುಳಿದ್ದು, ಹಲವೆಡೆ ಸಂಚಾರ ಮತ್ತು ವಿದ್ಯುತ್ ವ್ಯವಸ್ಥೆ ಅಸ್ತವ್ಯಸ್ತವಾಗಿದೆ.

ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಕಕ್ಕೇರಿ ಗ್ರಾಮದಲ್ಲಿ ಅತಿ ಹೆಚ್ಚು ಹಾನಿ ಸಂಭವಿಸಿದೆ. ರಸ್ತೆ ಮೇಲೆ ಮರಗಳು ಬಿದ್ದ ಪರಿಣಾಮ ವಾಹನ ಸಂಚಾರಕ್ಕೆ ತೀವ್ರ ಅಡಚಣೆ ಉಂಟಾಗಿದೆ. ವಿದ್ಯುತ್ ಕಂಬಗಳು ಧರೆಗೆ ಉರುಳಿದ ಕಾರಣ ಹಲವೆಡೆ ವಿದ್ಯುತ್ ವ್ಯತ್ಯಯ ಕೂಡ ಉಂಟಾಗಿದೆ.

ಬಾಗಲಕೋಟೆಯ ಬಾದಾಮಿಯಲ್ಲೂ ಇದೇ ರೀತಿಯ ಪರಿಸ್ಥಿತಿ ನಿರ್ಮಾಣವಾಗಿದ್ದು, ಮರಗಳು ಹಾಗೂ ವಿದ್ಯುತ್ ಕಂಬಗಳು ರಸ್ತೆಗೆ ಬಿದ್ದ ಪರಿಣಾಮ ಬಾಗಲಕೋಟೆ-ಬಾದಾಮಿ ರಸ್ತೆ ಸಂಚಾರಕ್ಕೆ ತೊಂದರೆಯಾಗಿದೆ.

ಇನ್ನೂ ಮಂಗಳೂರಿನಲ್ಲಿ ಗುಡುಗು-ಮಿಂಚು ಸಹಿತ ಸುರಿದ ಧಾರಾಕಾರ ಮಳೆಯಿಂದ ವಾಹನ ಸವಾರರು ಸಂಕಷ್ಟ ಅನುಭವಿಸಿದರು. ಕೆಲ ಬೈಕ್ ಸವಾರರು ವಾಹನಗಳನ್ನು ರಸ್ತೆ ಬದಿಯಲ್ಲಿ ನಿಲ್ಲಿಸಿ ನಡೆದುಕೊಂಡು ತೆರಳುವ ಪರಿಸ್ಥಿತಿ ಎದುರಾಯಿತು.

ಕಾರವಾರ ಹಾಗೂ ಹುಬ್ಬಳ್ಳಿಯಲ್ಲೂ ಭಾರಿ ಮಳೆಯಿಂದ ರಸ್ತೆಗಳು ಜಲಾವೃತಗೊಂಡು ವಾಹನ ಸಂಚಾರ ನಿಧಾನಗೊಂಡಿತು. ರಾಜ್ಯದ ವಿವಿಧ ಭಾಗಗಳಲ್ಲಿ ಮಳೆಯಿಂದ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದು, ಹಾನಿಗೊಳಗಾದ ಪ್ರದೇಶಗಳಲ್ಲಿ ಸ್ಥಳೀಯ ಆಡಳಿತ ಪರಿಹಾರ ಕಾರ್ಯ ಕೈಗೊಂಡಿದೆ.

ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ: ಕರಾವಳಿಗೆ ಹೀಟ್‌ವೇವ್ ಅಲರ್ಟ್!

ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಇಂದು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇಷ್ಟು ದಿನ ತಂಪಾಗಿದ್ದ ಕರಾವಳಿ ಭಾಗದಲ್ಲಿ ಇದೀಗ ಮತ್ತೆ ಬಿಸಿಗಾಳಿ ಆತಂಕ ಹೆಚ್ಚಾಗಿದ್ದು, ಕೆಲವು ಜಿಲ್ಲೆಗಳಿಗೆ ಹೀಟ್‌ವೇವ್ ಎಚ್ಚರಿಕೆ ನೀಡಲಾಗಿದೆ.

ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಹಲವೆಡೆ ಮುಂದಿನ ಮೂರ್ನಾಲ್ಕು ದಿನಗಳ ಕಾಲ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆ ಎಚ್ಚರಿಕೆ ವಹಿಸುವಂತೆ ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಸೂಚಿಸಿದೆ.

ಕರಾವಳಿ ಭಾಗದಲ್ಲಿ ಇಂದು ಬಿಸಿಗಾಳಿ ಅಲರ್ಟ್ ಜಾರಿಯಲ್ಲಿದ್ದು, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಾತ್ರ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.

ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಹಾಗೂ ರಾಯಚೂರು ಜಿಲ್ಲೆಗಳಲ್ಲಿ ಗಂಟೆಗೆ 40 ರಿಂದ 50 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದ್ದು, ಮಳೆಯೂ ಆಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇನ್ನೂ ದಕ್ಷಿಣ ಒಳನಾಡಿನ ಶಿವಮೊಗ್ಗ, ದಾವಣಗೆರೆ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಚಾಮರಾಜನಗರ ಹಾಗೂ ಮಂಡ್ಯ ಜಿಲ್ಲೆಗಳ ಕೆಲವು ಭಾಗಗಳಲ್ಲಿ 30 ರಿಂದ 40 ಕಿಲೋಮೀಟರ್ ವೇಗದ ಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆ ಇದೆ.

ಮೇ 15 ಮತ್ತು 16ರಂದು ದಕ್ಷಿಣ ಒಳನಾಡಿನ ಕೆಲ ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. 64.5 ಮಿ.ಮೀ ರಿಂದ 115.5 ಮಿ.ಮೀ ವರೆಗೆ ಮಳೆಯಾಗುವ ಸಾಧ್ಯತೆ ಇರುವುದರಿಂದ ದಕ್ಷಿಣ ಒಳನಾಡಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಜನರು ಸುರಕ್ಷತಾ ಕ್ರಮಗಳನ್ನು ಪಾಲಿಸಿ, ಗುಡುಗು-ಮಿಂಚಿನ ವೇಳೆ ಮರಗಳ ಕೆಳಗೆ ನಿಲ್ಲದಂತೆ ಹಾಗೂ ಅಗತ್ಯವಿಲ್ಲದೆ ಹೊರಗೆ ತೆರಳದಂತೆ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಮನವಿ ಮಾಡಿದೆ.

PM ಮೋದಿ ಕರೆಗೆ ಬೆಂಗಳೂರಿಗರ ಸ್ಪಂದನೆ: ಮೆಟ್ರೋ, ಬಸ್ ಬಳಕೆ ಹೆಚ್ಚಳ!

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಇಂಧನ ಉಳಿತಾಯ ಹಾಗೂ ಸಾರ್ವಜನಿಕ ಸಾರಿಗೆ ಬಳಕೆಗೆ ನೀಡಿದ ಕರೆಗೆ ಬೆಂಗಳೂರಿನಲ್ಲಿ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.

ಜಾಗತಿಕ ಕಚ್ಚಾ ತೈಲ ಬಿಕ್ಕಟ್ಟಿನ ನಡುವೆಯೇ ಮೆಟ್ರೋ ಮತ್ತು ಬಸ್ ಬಳಕೆ ಹೆಚ್ಚಿಸಲು ನೀಡಿದ ಸಲಹೆಯನ್ನು ನಗರದ ಜನರು ಪಾಸಿಟಿವ್ ಆಗಿ ಸ್ವೀಕರಿಸಿದ್ದಾರೆ. ಹೈದರಾಬಾದ್‌ನಲ್ಲಿ ಇತ್ತೀಚೆಗೆ ಮಾತನಾಡಿದ್ದ ಪ್ರಧಾನಿ ಮೋದಿ, ಜಾಗತಿಕ ಇಂಧನ ಬಿಕ್ಕಟ್ಟಿನ ಸಂದರ್ಭದಲ್ಲಿ ದೇಶ ಒಗ್ಗಟ್ಟಾಗಿ ಸಾಧ್ಯವಾದಷ್ಟು ಸಾರ್ವಜನಿಕ ಸಾರಿಗೆಯನ್ನು ಬಳಸಬೇಕು ಎಂದು ಮನವಿ ಮಾಡಿದ್ದರು. ಇದರ ಪರಿಣಾಮವಾಗಿ ಮೆಜೆಸ್ಟಿಕ್‌ನ ಕೆಂಪೇಗೌಡ ಬಸ್ ನಿಲ್ದಾಣ ಹಾಗೂ ನಮ್ಮ ಮೆಟ್ರೋ ನಿಲ್ದಾಣಗಳಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಳ ಕಂಡಿದೆ.

“ಬೈಕ್ ಬಳಸುವುದಕ್ಕಿಂತ ಮೆಟ್ರೋ ಬಳಕೆ ಮಾಡಿದರೆ ಹಣ ಮತ್ತು ಸಮಯ ಎರಡೂ ಉಳಿಯುತ್ತದೆ” ಎಂದು ಅನೇಕ ಪ್ರಯಾಣಿಕರು ಅಭಿಪ್ರಾಯಪಟ್ಟಿದ್ದಾರೆ. ಕೆಲವರು ಇಷ್ಟು ದಿನ ಖಾಸಗಿ ವಾಹನ ಬಳಸುತ್ತಿದ್ದರೂ, ಈಗ ಕಚೇರಿಗೆ ಮೆಟ್ರೋ ಮೂಲಕವೇ ತೆರಳಲು ನಿರ್ಧರಿಸಿದ್ದೇವೆ ಎಂದು ತಿಳಿಸಿದ್ದಾರೆ.

ಪೆಟ್ರೋಲ್ ಹಾಗೂ ಡೀಸೆಲ್ ಆಮದು ಕಡಿಮೆ ಮಾಡಿದರೆ ದೇಶದ ಆರ್ಥಿಕತೆಗೆ ಬಲ ಸಿಗಲಿದೆ ಎಂಬ ಅರಿವು ಜನರಲ್ಲಿ ಹೆಚ್ಚುತ್ತಿದೆ ಎನ್ನಲಾಗಿದೆ.

ಇನ್ನೊಂದೆಡೆ ದೇಶಾದ್ಯಂತ ಡೀಸೆಲ್ ಕೊರತೆಯ ಎಚ್ಚರಿಕೆ ಕೂಡ ವ್ಯಕ್ತವಾಗಿದೆ. ಬಲ್ಕ್ ಸರಬರಾಜು ದರ ಹಾಗೂ ಚಿಲ್ಲರೆ ಮಾರಾಟ ದರದ ವ್ಯತ್ಯಾಸದಿಂದ ಅನೇಕ ಕೈಗಾರಿಕೆಗಳು ನೇರವಾಗಿ ಪೆಟ್ರೋಲ್ ಬಂಕ್‌ಗಳಿಂದ ಹೈ ಸ್ಪೀಡ್ ಡೀಸೆಲ್ ಖರೀದಿ ಮಾಡುತ್ತಿವೆ. ಇದರಿಂದ ಚಿಲ್ಲರೆ ಬಂಕ್‌ಗಳಲ್ಲಿ ದಾಸ್ತಾನು ನಿರ್ವಹಣೆ ಕಷ್ಟವಾಗುತ್ತಿದೆ ಎಂದು ಇಂಡಿಯನ್ ಆಯಿಲ್ ಪೆಟ್ರೋಲಿಯಂ ಡೀಲರ್ಸ್ ಅಸೋಸಿಯೇಷನ್ ಪ್ರಧಾನಿ ಮೋದಿ ಅವರಿಗೆ ದೂರು ನೀಡಿದೆ.

ಜಾಗತಿಕ ಮಟ್ಟದಲ್ಲಿ ಅಮೆರಿಕ, ಇಸ್ರೇಲ್ ಹಾಗೂ ಇರಾನ್ ನಡುವಿನ ಯುದ್ಧ ಭೀತಿ ಹೆಚ್ಚುತ್ತಿರುವ ಹಿನ್ನೆಲೆ ಇಂಧನ ಉಳಿತಾಯ ಕ್ರಮಗಳು ಅನಿವಾರ್ಯವಾಗುತ್ತಿವೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಕಾಲ್ಬೆರಳುಗಳಲ್ಲಿ ಕೂದಲು ಇದೆಯಾ? ಹಾಗಿದ್ರೆ ನಿಮ್ಮ ವ್ಯಕ್ತಿತ್ವ ಹೀಗಿರುತ್ತಂತೆ!

ಜ್ಯೋತಿಷ್ಯಶಾಸ್ತ್ರ ಮತ್ತು ಸಂಖ್ಯಾಶಾಸ್ತ್ರದಂತೆ ದೇಹದ ರಚನೆಯೂ ವ್ಯಕ್ತಿಯ ಸ್ವಭಾವ ಹಾಗೂ ಭವಿಷ್ಯದ ಬಗ್ಗೆ ಹಲವು ಸಂಗತಿಗಳನ್ನು ಹೇಳುತ್ತದೆ ಎನ್ನಲಾಗುತ್ತದೆ.

ಹಣೆಯ ಆಕಾರ, ಕಣ್ಣುಗಳ ಬಣ್ಣ, ಮೂಗು, ಕಿವಿ, ಕಾಲ್ಬೆರಳುಗಳ ರೂಪ ಮಾತ್ರವಲ್ಲದೆ ದೇಹದ ಸಣ್ಣ ಲಕ್ಷಣಗಳೂ ವ್ಯಕ್ತಿತ್ವದ ಹಲವು ಅಂಶಗಳನ್ನು ಬಹಿರಂಗಪಡಿಸುತ್ತವೆ. ಇದೀಗ ಕಾಲ್ಬೆರಳುಗಳಲ್ಲಿ ಕೂದಲು ಇರುವವರ ವ್ಯಕ್ತಿತ್ವದ ಬಗ್ಗೆ ಕೆಲ ಆಸಕ್ತಿಕರ ಮಾಹಿತಿಗಳು ವೈರಲ್ ಆಗಿವೆ.

ಸ್ವಾವಲಂಬಿ ಮತ್ತು ಆತ್ಮವಿಶ್ವಾಸಿ ವ್ಯಕ್ತಿತ್ವ

ಕಾಲ್ಬೆರಳುಗಳ ಮೇಲೆ ಕೂದಲು ಇರುವವರು ಸಾಮಾನ್ಯವಾಗಿ ಬಲವಾದ ವ್ಯಕ್ತಿತ್ವ ಹೊಂದಿರುತ್ತಾರೆ ಎಂದು ಹೇಳಲಾಗುತ್ತದೆ. ಇವರು ತಮ್ಮ ಆಲೋಚನೆ ಮತ್ತು ನಿರ್ಧಾರಗಳ ಮೇಲೆ ಹೆಚ್ಚಿನ ನಂಬಿಕೆ ಇಡುತ್ತಾರೆ. ಯಾವುದೇ ಕೆಲಸವನ್ನು ಆತ್ಮವಿಶ್ವಾಸದಿಂದ ಕೈಗೆತ್ತಿಕೊಂಡು ಯಶಸ್ಸು ಸಾಧಿಸುವ ಗುಣ ಇವರಲ್ಲಿರುತ್ತದೆ.

ನಾಯಕತ್ವದ ಗುಣ ಹೆಚ್ಚು

ಇಂತಹವರು ಉದ್ಯೋಗವಾಗಲಿ ಅಥವಾ ವ್ಯವಹಾರವಾಗಲಿ, ತಮ್ಮದೇ ಆದ ಶೈಲಿಯಲ್ಲಿ ಹೆಸರು ಮಾಡುತ್ತಾರೆ. ನಿರ್ಧಾರಗಳನ್ನು ತೆಗೆದುಕೊಳ್ಳುವಲ್ಲಿ ಹಿಂಜರಿಯದೇ ಮುನ್ನಡೆಯುವ ಗುಣ ಇವರಲ್ಲಿರುತ್ತದೆ. ತಂಡ ಅಥವಾ ಕುಟುಂಬದಲ್ಲಿ ನಾಯಕತ್ವದ ಪಾತ್ರವನ್ನು ಬೇಗನೆ ವಹಿಸಿಕೊಳ್ಳುತ್ತಾರೆ.

ಜವಾಬ್ದಾರಿಯುತರು

ಕಾಲ್ಬೆರಳುಗಳಲ್ಲಿ ಕೂದಲು ಇರುವವರು ತಮ್ಮ ಜವಾಬ್ದಾರಿಗಳಿಂದ ಹಿಂದೆ ಸರಿಯುವುದಿಲ್ಲ ಎನ್ನಲಾಗುತ್ತದೆ. ಯಾವುದೇ ವಿಷಯದಲ್ಲಿ ಪ್ರಾಯೋಗಿಕವಾಗಿ ಯೋಚಿಸಿ ತೀರ್ಮಾನ ಕೈಗೊಳ್ಳುವ ಗುಣ ಇವರಿಗೆ ಹೆಚ್ಚು. ಇದರಿಂದ ಸುತ್ತಮುತ್ತಲಿನವರು ಇವರ ಮೇಲೆ ಬೇಗನೆ ನಂಬಿಕೆ ಇಡುತ್ತಾರೆ.

ಆಧ್ಯಾತ್ಮಿಕ ಚಿಂತನೆ

ಇವರಿಗೆ ಆಧ್ಯಾತ್ಮಿಕತೆಯ ಕಡೆಗೆ ಹೆಚ್ಚಿನ ಒಲವು ಇರುತ್ತದೆ. ಆಳವಾದ ಚಿಂತನೆ ಮಾಡುವ ಗುಣ ಇವರಲ್ಲಿದ್ದು, ವಿಷಯಗಳನ್ನು ಸೂಕ್ಷ್ಮವಾಗಿ ಅರ್ಥಮಾಡಿಕೊಳ್ಳುವ ಸಾಮರ್ಥ್ಯವೂ ಉತ್ತಮವಾಗಿರುತ್ತದೆ.

ಕೋಪ ಮತ್ತು ಅಹಂಕಾರವೂ ಇರಬಹುದು!

ಕಾಲ್ಬೆರಳಿನ ಕೂದಲು ತುಂಬಾ ದಪ್ಪ ಅಥವಾ ಒರಟಾಗಿದ್ದರೆ, ಅಂತಹವರು ಕೆಲವೊಮ್ಮೆ ಸೊಕ್ಕಿನ ಸ್ವಭಾವ ಹೊಂದಿರಬಹುದು ಎಂದು ಹೇಳಲಾಗುತ್ತದೆ. ಜೊತೆಗೆ ಅತಿಯಾದ ಕೋಪದಿಂದ ಕೆಲವು ಸಂದರ್ಭಗಳಲ್ಲಿ ತಪ್ಪು ನಿರ್ಧಾರಗಳನ್ನು ತೆಗೆದುಕೊಳ್ಳುವ ಸಾಧ್ಯತೆಯೂ ಇರುತ್ತದೆ.

IPL 2026: ಕೆಕೆಆರ್ ವಿರುದ್ಧ ಫಿಲ್ ಸಾಲ್ಟ್ ಆಡ್ತಾರಾ? ಆಡಲ್ವಾ? ಇಲ್ಲಿದೆ ಮಾಹಿತಿ!

ಇಂಡಿಯನ್ ಪ್ರೀಮಿಯರ್ ಲೀಗ್‌ನ 57ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಮುಖಾಮುಖಿಯಾಗಲಿವೆ.

ಶಾಹೀದ್ ವೀರ್ ನಾರಾಯಣ್ ಸಿಂಗ್ ಕ್ರೀಡಾಂಗಣದಲ್ಲಿ ನಡೆಯಲಿರುವ ಈ ಹೈವೋಲ್ಟೇಜ್ ಪಂದ್ಯಕ್ಕೂ ಮುನ್ನ ಆರ್‌ಸಿಬಿ ಅಭಿಮಾನಿಗಳಲ್ಲಿ ಒಂದು ಪ್ರಶ್ನೆ ಹೆಚ್ಚಾಗಿ ಚರ್ಚೆಯಾಗುತ್ತಿದೆ. ಅದು ಸ್ಫೋಟಕ ಬ್ಯಾಟರ್ ಫಿಲ್ ಸಾಲ್ಟ್ ಕಣಕ್ಕಿಳಿಯುವರಾ ಎಂಬುದು.

ಗಾಯದ ಕಾರಣ ಇಂಗ್ಲೆಂಡ್‌ಗೆ ತೆರಳಿದ್ದ ಫಿಲ್ ಸಾಲ್ಟ್ ಇದೀಗ ಭಾರತಕ್ಕೆ ಮರಳಿ ಆರ್‌ಸಿಬಿ ತಂಡವನ್ನು ಸೇರಿಕೊಂಡಿದ್ದಾರೆ. ಹೀಗಾಗಿ ಕೆಕೆಆರ್ ವಿರುದ್ಧದ ಪಂದ್ಯದಲ್ಲಿ ಅವರು ಮತ್ತೆ ಆರಂಭಿಕರಾಗಿ ಆಡಲಿದ್ದಾರೆ ಎಂಬ ನಿರೀಕ್ಷೆ ಮೂಡಿತ್ತು. ಆದರೆ ಸದ್ಯದ ಮಾಹಿತಿಯ ಪ್ರಕಾರ ಅವರ ಆಡುವುದು ಅನುಮಾನ ಎನ್ನಲಾಗಿದೆ.

ಮಂಗಳವಾರ ನಡೆದ ಆರ್‌ಸಿಬಿ ತಂಡದ ಅಭ್ಯಾಸದಲ್ಲೂ ಫಿಲ್ ಸಾಲ್ಟ್ ಕಾಣಿಸಿಕೊಂಡಿಲ್ಲ. ಅವರ ಬೆರಳಿನ ಗಾಯ ಇನ್ನೂ ಸಂಪೂರ್ಣ ಗುಣಮುಖವಾಗಿಲ್ಲ ಎನ್ನಲಾಗಿದ್ದು, ವೈದ್ಯರು ಇನ್ನೂ ಕೆಲ ದಿನ ವಿಶ್ರಾಂತಿ ಪಡೆಯಲು ಸೂಚಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಫಿಲ್ ಸಾಲ್ಟ್ ಹೊರಗುಳಿಯುವ ಸಾಧ್ಯತೆ ಹೆಚ್ಚಿರುವ ಹಿನ್ನೆಲೆ, ವಿರಾಟ್ ಕೊಹ್ಲಿ ಜೊತೆ ಯುವ ಎಡಗೈ ಬ್ಯಾಟರ್ ಜೇಕಬ್ ಬೆಥೆಲ್ ಇನಿಂಗ್ಸ್ ಆರಂಭಿಸುವ ಸಾಧ್ಯತೆ ಬಹುತೇಕ ಖಚಿತವಾಗಿದೆ. ಕಳೆದ ಪಂದ್ಯದಲ್ಲಿಯೂ ಈ ಜೋಡಿ ಆರಂಭಿಕರಾಗಿ ಕಣಕ್ಕಿಳಿದಿತ್ತು.

ಗೋಲ್ಡ್ ಖರೀದಿದಾರರಿಗೆ ಶಾಕ್: ಕೇಂದ್ರದಿಂದ ಭಾರಿ ಸುಂಕ ಏರಿಕೆ!

ನವದೆಹಲಿ: ಜಾಗತಿಕ ಆರ್ಥಿಕ ಅಸ್ಥಿರತೆ ಹಾಗೂ ಇಂಧನ ಬಿಕ್ಕಟ್ಟಿನ ನಡುವೆಯೇ ದೇಶದ ಆರ್ಥಿಕತೆಯನ್ನು ರಕ್ಷಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಚಿನ್ನ ಮತ್ತು ಬೆಳ್ಳಿಯ ಮೇಲಿನ ಆಮದು ಸುಂಕವನ್ನು ಭಾರೀ ಪ್ರಮಾಣದಲ್ಲಿ ಹೆಚ್ಚಿಸಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚೆಗೆ ಮಾಡಿದ ಆರ್ಥಿಕ ಮಿತವ್ಯಯದ ಮನವಿಯ ಬೆನ್ನಲ್ಲೇ ಈ ನಿರ್ಧಾರ ಹೊರಬಿದ್ದಿದೆ. ಈ ಹಿಂದೆ ಶೇ 6 ರಷ್ಟಿದ್ದ ಒಟ್ಟಾರೆ ಆಮದು ಸುಂಕವನ್ನು ಈಗ ಶೇ 15 ಕ್ಕೆ ಏರಿಸಲಾಗಿದೆ. ಇದರಲ್ಲಿ ಶೇ 10 ರಷ್ಟು ಮೂಲ ಕಸ್ಟಮ್ಸ್ ಸುಂಕ ಹಾಗೂ ಶೇ 5 ರಷ್ಟು ಕೃಷಿ ಮೂಲಸೌಕರ್ಯ ಅಭಿವೃದ್ಧಿ ಸೆಸ್ ಸೇರಿದೆ. ಈ ನಿರ್ಧಾರದಿಂದ ದೇಶೀಯ ಮಾರುಕಟ್ಟೆಯಲ್ಲಿ ಚಿನ್ನ ಹಾಗೂ ಬೆಳ್ಳಿಯ ದರ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ.

ಡಾಲರ್ ಎದುರು ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ ಕಂಡ ಹಿನ್ನೆಲೆಯಲ್ಲಿ, ವಿದೇಶಿ ವಿನಿಮಯ ಮೀಸಲು ನಿಧಿಯನ್ನು ರಕ್ಷಿಸಲು ಸರ್ಕಾರ ಈ ಕ್ರಮ ಕೈಗೊಂಡಿದೆ ಎನ್ನಲಾಗಿದೆ. ಇರಾನ್ ಯುದ್ಧ ಹಾಗೂ ಜಾಗತಿಕ ತೈಲ ಬೆಲೆ ಏರಿಕೆಯಿಂದ ಉಂಟಾಗಬಹುದಾದ ಆರ್ಥಿಕ ಒತ್ತಡವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕಾ ಕ್ರಮವಾಗಿ ಈ ನಿರ್ಧಾರ ಕೈಗೊಂಡಿದೆ.

ಪ್ರಧಾನಿ ಮೋದಿ ಅವರು ನಾಗರಿಕರಿಗೆ ಕನಿಷ್ಠ ಒಂದು ವರ್ಷದವರೆಗೆ ಚಿನ್ನ ಖರೀದಿಯನ್ನು ಮುಂದೂಡಬೇಕು, ವಿದೇಶಿ ಪ್ರವಾಸ ಕಡಿಮೆ ಮಾಡಬೇಕು ಹಾಗೂ ಸಾರ್ವಜನಿಕ ಸಾರಿಗೆಯನ್ನು ಹೆಚ್ಚು ಬಳಸಬೇಕು ಎಂದು ಮನವಿ ಮಾಡಿದ್ದರು. ಆಮದು ಅವಲಂಬನೆ ಕಡಿಮೆ ಮಾಡಿ ದೇಶದ ಆರ್ಥಿಕತೆಯನ್ನು ಬಲಪಡಿಸುವುದೇ ಈ ಕರೆಯ ಉದ್ದೇಶ ಎಂದು ಹೇಳಲಾಗಿದೆ.

ಭಾರತವು ವಿಶ್ವದಲ್ಲೇ ಚಿನ್ನದ ಎರಡನೇ ಅತಿದೊಡ್ಡ ಗ್ರಾಹಕ ರಾಷ್ಟ್ರವಾಗಿದ್ದು, ಸುಂಕ ಏರಿಕೆಯಿಂದ ಚಿನ್ನದ ಬೇಡಿಕೆಯಲ್ಲಿ ಕುಸಿತ ಉಂಟಾಗುವ ಸಾಧ್ಯತೆ ಇದೆ. ಆದರೆ ಮತ್ತೊಂದೆಡೆ ಅಧಿಕ ತೆರಿಗೆಯಿಂದ ಚಿನ್ನದ ಕಳ್ಳಸಾಗಣೆ ಹೆಚ್ಚಾಗುವ ಆತಂಕವೂ ವ್ಯಕ್ತವಾಗಿದೆ.

ಈಗಾಗಲೇ ಏಪ್ರಿಲ್ ತಿಂಗಳಲ್ಲಿ ಭಾರತದ ಚಿನ್ನದ ಆಮದು ಕಳೆದ 30 ವರ್ಷಗಳಲ್ಲೇ ಕನಿಷ್ಠ ಮಟ್ಟ ತಲುಪಿತ್ತು. ಇದೀಗ ಸುಂಕ ಏರಿಕೆಯಿಂದ ಆಮದು ಪ್ರಮಾಣ ಇನ್ನಷ್ಟು ಇಳಿಯುವ ಸಾಧ್ಯತೆ ಇದೆ.

ಸ್ಯಾಂಡಲ್‌ವುಡ್‌ಗೆ ಆಘಾತ: ಕನ್ನಡದ ಖ್ಯಾತ ನಟ ದಿಲೀಪ್ ರಾಜ್ ಇನ್ನಿಲ್ಲ!

ಬೆಂಗಳೂರು: ಹಲವು ವರ್ಷಗಳಿಂದ ಕನ್ನಡ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದ ಖ್ಯಾತ ನಟ ದಿಲೀಪ್ ರಾಜ್ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ.

ಮನೆಯಲ್ಲೇ ಅವರಿಗೆ ಹೃದಯಾಘಾತ ಸಂಭವಿಸಿದ್ದು, ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತಾದರೂ ಅವರು ಬದುಕುಳಿಯಲಿಲ್ಲ ಎಂದು ತಿಳಿದುಬಂದಿದೆ.

ದಿಲೀಪ್ ರಾಜ್ ನಿಧನದ ಸುದ್ದಿ ತಿಳಿಯುತ್ತಿದ್ದಂತೆಯೇ ಚಿತ್ರರಂಗದ ಅನೇಕ ಕಲಾವಿದರು, ಸ್ನೇಹಿತರು ಹಾಗೂ ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ. ಕನ್ನಡ ಸಿನಿಮಾಗಳಲ್ಲಿ ತಮ್ಮದೇ ಆದ ನಟನೆಯ ಮೂಲಕ ಗುರುತಿಸಿಕೊಂಡಿದ್ದ ಅವರು ಹಲವು ಜನಪ್ರಿಯ ಚಿತ್ರಗಳಲ್ಲಿ ಅಭಿನಯಿಸಿದ್ದರು.

ಮಿಲನ, ಯು ಟರ್ನ್, ಆರ್ಕೆಸ್ಟ್ರಾ ಮೈಸೂರು, ನಿಮ್ಮ ವಸ್ತುಗಳಿಗೆ ನೀವೇ ಜವಾಬ್ದಾರರು ಸೇರಿದಂತೆ ಹಲವು ಸಿನಿಮಾಗಳಲ್ಲಿ ಅವರು ನಟಿಸಿದ್ದರು.

ಸಿನಿಮಾ ಮಾತ್ರವಲ್ಲದೆ ಕಿರುತೆರೆಯಲ್ಲೂ ದಿಲೀಪ್ ರಾಜ್ ಸಕ್ರಿಯರಾಗಿದ್ದರು. ಹಿಟ್ಲರ್ ಕಲ್ಯಾಣ ಧಾರಾವಾಹಿಯಲ್ಲಿ ಅಭಿನಯಿಸಿದ್ದ ಅವರು, ಪಾರು ಹಾಗೂ ನಾ ನಿನ್ನ ಬಿಡಲಾರೆ ಧಾರಾವಾಹಿಗಳನ್ನು ನಿರ್ಮಾಣ ಮಾಡಿದ್ದರು.

NEET-UG 2026 ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: ಕಿಂಗ್‌ಪಿನ್ ಬಂಧನ, ತನಿಖೆ ತೀವ್ರ!

ನವದೆಹಲಿ: ಮೇ 3 ರಂದು ನಡೆದ NEET-UG 2026 ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಕಿಂಗ್‌ಪಿನ್ ಅನ್ನು ಪೊಲೀಸರು ಬಂಧಿಸಿದ್ದಾರೆ.

ಈ ಪ್ರಕರಣದಲ್ಲಿ ಅಂತರರಾಜ್ಯ ಸಂಘಟಿತ ಜಾಲ ಕಾರ್ಯನಿರ್ವಹಿಸಿದ್ದ ಮಾಹಿತಿ ತನಿಖೆಯಿಂದ ಬೆಳಕಿಗೆ ಬಂದಿದೆ. ರಾಜಸ್ಥಾನ ಪೊಲೀಸರ ವಿಶೇಷ ಕಾರ್ಯಾಚರಣೆ ತಂಡ (SOG) ನಡೆಸಿದ ತನಿಖೆಯಲ್ಲಿ ಈ ಜಾಲದ ಪ್ರಮುಖ ಆರೋಪಿ ಮನೀಶ್ ಯಾದವ್ ಎಂಬಾತನನ್ನು ಜೈಪುರದಲ್ಲಿ ಬಂಧಿಸಲಾಗಿದೆ. ಆತ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಅದನ್ನು ಸಂಘಟಿತವಾಗಿ ವಿತರಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದಲ್ಲದೆ ಮತ್ತೊಬ್ಬ ಆರೋಪಿ ರಾಕೇಶ್ ಮಾಂಡವಾರಿಯಾನನ್ನೂ ಬಂಧಿಸಲಾಗಿದೆ. ಸೋರಿಕೆಯಾದ ಪ್ರಶ್ನೆ ಪತ್ರಿಕೆಯನ್ನು ವಿವಿಧ ರಾಜ್ಯಗಳಿಗೆ ಪ್ರಸಾರ ಮಾಡುವ ಜವಾಬ್ದಾರಿ ಅವನ ಮೇಲಿತ್ತು ಎಂದು ತನಿಖಾಧಿಕಾರಿಗಳು ಶಂಕಿಸಿದ್ದಾರೆ.

ತನಿಖೆ ಇನ್ನಷ್ಟು ವಿಸ್ತರಗೊಂಡಿದ್ದು, ರಾಜಸ್ಥಾನ, ಮಹಾರಾಷ್ಟ್ರ, ಉತ್ತರಾಖಂಡ ಸೇರಿದಂತೆ ಹಲವು ರಾಜ್ಯಗಳಲ್ಲಿ ದಾಳಿಗಳು ನಡೆದಿವೆ. ಇದುವರೆಗೆ ಸುಮಾರು 9 ಆರೋಪಿಗಳನ್ನು ಬಂಧಿಸಲಾಗಿದ್ದು, 45ಕ್ಕೂ ಹೆಚ್ಚು ಶಂಕಿತರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

ರಾಜಸ್ಥಾನದ ಸಿಕಾರ್ ಮತ್ತು ಜುಂಜುನು ಜಿಲ್ಲೆಗಳು, ಜೊತೆಗೆ ಡೆಹ್ರಾಡೂನ್‌ನಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ ಪ್ರಮುಖ ಶಂಕಿತರು ಬಂಧಿತರಾಗಿದ್ದಾರೆ. ಮಹಾರಾಷ್ಟ್ರದ ನಾಸಿಕ್‌ನಲ್ಲಿ ಶುಭಂ ಖೈರ್ನಾರ್ ಎಂಬಾತನನ್ನು ಸಹ ಪೊಲೀಸರು ಬಂಧಿಸಿದ್ದಾರೆ.

ಪರೀಕ್ಷಾ ವ್ಯವಸ್ಥೆಯ ಪಾವಿತ್ರ್ಯಕ್ಕೆ ಧಕ್ಕೆ ತರುವ ಈ ಅಕ್ರಮ ಜಾಲದ ಸಂಪೂರ್ಣ ಪತ್ತೆಗೆ ವಿವಿಧ ರಾಜ್ಯಗಳ ಪೊಲೀಸರು ಹಾಗೂ ವಿಶೇಷ ತನಿಖಾ ತಂಡಗಳು ಕಾರ್ಯಾಚರಣೆ ಮುಂದುವರಿಸಿದ್ದಾರೆ.

 

ರಾಯರ ಮಠದಲ್ಲಿ ದಾಖಲೆ ಬರೆದ ಹುಂಡಿ ಎಣಿಕೆ! 20 ದಿನದಲ್ಲಿ 2.78 ಕೋಟಿ ಕಾಣಿಕೆ ಸಂಗ್ರಹ

ರಾಯಚೂರು: ಕಲಿಯುಗದ ಕಾಮಧೇನು ಎಂದೇ ಪ್ರಸಿದ್ಧವಾದ ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠಕ್ಕೆ ಏಪ್ರಿಲ್ ಹಾಗೂ ಮೇ ತಿಂಗಳ ಮೊದಲ 20 ದಿನಗಳಲ್ಲಿ ಭಕ್ತರಿಂದ ಭಾರೀ ಪ್ರಮಾಣದ ಕಾಣಿಕೆ ಹರಿದು ಬಂದಿದೆ.

ಮಠದಲ್ಲಿ ನಡೆದ ಕಾಣಿಕೆ ಹುಂಡಿ ಎಣಿಕೆ ಕಾರ್ಯ ಸೋಮವಾರ ರಾತ್ರಿ ಮುಕ್ತಾಯವಾಗಿದ್ದು, ಒಟ್ಟು ₹2,78,19,526 ರೂಪಾಯಿ ಸಂಗ್ರಹವಾಗಿದೆ ಎಂದು ಮಠದ ಮೂಲಗಳು ತಿಳಿಸಿವೆ. ಇದರಲ್ಲಿ ₹2,69,28,176 ನೋಟು ರೂಪದಲ್ಲಿದ್ದು, ₹8,91,350 ನಾಣ್ಯಗಳ ರೂಪದಲ್ಲಿ ಸಂಗ್ರಹವಾಗಿದೆ.

ಅದೇ ರೀತಿ ಭಕ್ತರು ಕಾಣಿಕೆ ರೂಪದಲ್ಲಿ 15.100 ಗ್ರಾಂ ಚಿನ್ನ ಹಾಗೂ 751 ಗ್ರಾಂ ಬೆಳ್ಳಿಯನ್ನು ಸಮರ್ಪಿಸಿದ್ದಾರೆ ಎಂದು ತಿಳಿದುಬಂದಿದೆ.

ಹುಂಡಿ ಎಣಿಕೆ ಕಾರ್ಯದಲ್ಲಿ ಮಠದ ನೂರಾರು ಸಿಬ್ಬಂದಿ, ಭಜನಾ ಮಂಡಳಿಯ ಭಕ್ತರು ಹಾಗೂ ಕರ ಸೇವಕರು ಭಾಗವಹಿಸಿದ್ದರು. ಮಂತ್ರಾಲಯ ರಾಘವೇಂದ್ರ ಸ್ವಾಮಿ ಮಠದಲ್ಲಿ ಪ್ರತಿ ತಿಂಗಳು ನಡೆಯುವ ಹುಂಡಿ ಎಣಿಕೆ ಭಕ್ತರ ನಂಬಿಕೆ ಹಾಗೂ ಭಕ್ತಿಯ ಪ್ರತಿಬಿಂಬವಾಗಿದ್ದು, ಈ ಬಾರಿಯೂ ಭಾರೀ ಕಾಣಿಕೆ ದಾಖಲಾಗಿದೆ.

ಮುಗ್ಗೂರು ಅರಣ್ಯದಲ್ಲಿ ಹೆಣ್ಣಾನೆ ಸಾವು: ತಾಯಿ ಆನೆ ಬಳಿ ಮರಿ ಆನೆಯ ರೋಧನೆ!

ರಾಮನಗರ: ರಾಮನಗರ ಜಿಲ್ಲೆಯ ಕಾವೇರಿ ವನ್ಯಜೀವಿ ವಲಯದ ಮುಗ್ಗೂರು ಅರಣ್ಯ ಪ್ರದೇಶದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ.

ಅನಾರೋಗ್ಯದಿಂದ ಬಳಲುತ್ತಿದ್ದ 35 ವರ್ಷದ ಹೆಣ್ಣಾನೆ ಬಹುಅಂಗಾಂಗ ವೈಫಲ್ಯದಿಂದ ಮೃತಪಟ್ಟಿದ್ದು, ಅದರ ಬಳಿ ನಿಂತು ಮರಿ ಆನೆ ಮೂಕರೋಧನೆ ವ್ಯಕ್ತಪಡಿಸಿರುವ ದೃಶ್ಯ ಎಲ್ಲರ ಮನಕಲುಕಿಸಿದೆ.

ಕನಕಪುರ ತಾಲೂಕಿನ ಮಡಿವಾಳ ಸಮೀಪದ ಮುಗ್ಗೂರು ಅರಣ್ಯ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ತಾಯಿ ಆನೆ ಸಾವನ್ನಪ್ಪಿದ ವಿಷಯ ತಿಳಿಯದೇ ಅದರ ದೇಹದ ಬಳಿ ಮರಿ ಆನೆ ನಿಂತು ನಿರಂತರವಾಗಿ ಸುತ್ತಾಡಿ ರೋಧನೆ ವ್ಯಕ್ತಪಡಿಸಿದೆ ಎಂದು ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ.

ಈ ದೃಶ್ಯದ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ವನ್ಯಜೀವಿ ಪ್ರೇಮಿಗಳಲ್ಲಿ ಭಾವನಾತ್ಮಕ ಪ್ರತಿಕ್ರಿಯೆ ಮೂಡಿಸಿದೆ.

ಘಟನೆಯ ಮಾಹಿತಿ ಪಡೆದ ಕಾವೇರಿ ವನ್ಯಜೀವಿ ವಲಯದ ಅರಣ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಂತರ ಮೃತ ಕಾಡಾನೆಯ ಮರಣೋತ್ತರ ಪರೀಕ್ಷೆ ನಡೆಸಿ ಅಂತ್ಯಕ್ರಿಯೆ ನೆರವೇರಿಸಲಾಗಿದೆ.

ಬಳಿಕ ಅರಣ್ಯಾಧಿಕಾರಿಗಳು ಮರಿ ಆನೆಯನ್ನು ಶಾಂತಪಡಿಸಿ ಸುರಕ್ಷಿತವಾಗಿ ಕಾಡಿಗೆ ಬಿಡಲಾಗಿದೆ ಎಂದು ತಿಳಿದುಬಂದಿದೆ.

 

error: Content is protected !!