Home Blog

ರೂರಲ್‌ ಕಿಂಗ್ಸ್‌ ಮಣಿಸಿ ಫೈನಲ್‌ಗೆ ಲಗ್ಗೆಯಿಟ್ಟ ನೈಟ್‌ ರೈಡರ್ಸ್‌

0

ವಿಜಯಸಾಕ್ಷಿ ಸುದ್ದಿ, ಗದಗ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ವತಿಯಿಂದ ನಗರದ ವಿದ್ಯಾದಾನ ಸಮಿತಿ ಮೈದಾನದಲ್ಲಿ ನಡೆಯುತ್ತಿರುವ ಗದಗ ಮೀಡಿಯಾ ಕ್ರಿಕೆಟ್‌ ಲೀಗ್‌ ದಿನದಿಂದ ದಿನಕ್ಕೆ ರೋಚಕತೆ ಪಡೆದುಕೊಳ್ಳುತ್ತಿದ್ದು, ನೈಟ್‌ ರೈಡರ್ಸ್‌ ತಂಡವು ತನ್ನ ಎರಡನೇ ಪಂದ್ಯದಲ್ಲೇ ರೂರಲ್‌ ಕಿಂಗ್ಸ್‌ ತಂಡವನ್ನು 7 ವಿಕೆಟ್‌ಗಳ ಅಂತರದಿಂದ ಮಣಿಸಿ, ಇನ್ನೂ ಒಂದು ಪಂದ್ಯ ಬಾಕಿ ಇರುವಂತೆಯೇ ಫೈನಲ್‌ಗೆ ಲಗ್ಗೆಯಿಟ್ಟಿದೆ.

ಗುರುವಾರ ನಡೆದ ಪಂದ್ಯಾವಳಿಯ ನಾಲ್ಕನೇ ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ರೂರಲ್‌ ಕಿಂಗ್ಸ್‌ ತಂಡ ನಿಗದಿತ 10 ಓವರ್‌ಗಳಲ್ಲಿ 5 ವಿಕೆಟ್‌ ಕಳೆದುಕೊಂಡು 85 ರನ್‌ ಗಳಿಸಿತು. ಸೂರಜ್‌ ಮಯೇಕರ್‌ 28, ಪ್ರಕಾಶ ಗುದ್ದಿನ 14 ಹಾಗೂ ನಿಂಗನಗೌಡ ಹನಮಗೌಡ್ರ 13 ರನ್‌ ಗಳಿಸಿದರು. ನೈಟ್‌ ರೈಡರ್ಸ್‌ ಪರ ಮಂಜು ಪತ್ತಾರ 2 ವಿಕೆಟ್‌ ಪಡೆದರೆ, ಅರುಣಕುಮಾರ ಹಿರೇಮಠ, ಸಂಗನಗೌಡ ಖಾನಪ್ಪಗೌಡ್ರ ಹಾಗೂ ಸುರೇಶ ಕಡ್ಲಿಮಟ್ಟಿ ತಲಾ ಒಂದು ವಿಕೆಟ್‌ ಪಡೆದರು.

86 ರನ್‌ಗಳ ಗುರಿ ಬೆನ್ನತ್ತಿದ ನೈಟ್‌ ರೈಡರ್ಸ್‌ ತಂಡ ಮೊದಲ ಓವರ್‌ನಲ್ಲಿ 8 ರನ್‌ ಗಳಿಸಿದ್ದಾಗಲೇ ಒಂದು ವಿಕೆಟ್‌ ಕಳೆದುಕೊಂಡಿತು. ಆದರೆ ನಾಯಕ ಸುರೇಶ ಕಡ್ಲಿಮಟ್ಟಿ ಹಾಗೂ ಅರುಣಕುಮಾರ ಹಿರೇಮಠ ಜವಾಬ್ದಾರಿಯುತ ಬ್ಯಾಟಿಂಗ್‌ ನಡೆಸಿ 73 ರನ್‌ಗಳ ಅಮೋಘ ಜೊತೆಯಾಟ ನೀಡುವ ಮೂಲಕ ತಂಡವನ್ನು ಗೆಲುವಿನ ದಡ ಸೇರಿಸಿದರು.

ನೈಟ್‌ ರೈಡರ್ಸ್‌ ತಂಡ ಒಂದು ಓವರ್‌ ಬಾಕಿ ಇರುವಂತೆಯೇ 3 ವಿಕೆಟ್‌ ಕಳೆದುಕೊಂಡು ಗುರಿ ತಲುಪಿತು. ನಾಯಕ ಸುರೇಶ ಕಡ್ಲಿಮಟ್ಟಿ ಕೇವಲ 19 ಎಸೆತಗಳಲ್ಲಿ 41 ರನ್‌ ಸಿಡಿಸಿದರೆ, ಅರುಣಕುಮಾರ ಹಿರೇಮಠ 20 ಎಸೆತಗಳಲ್ಲಿ 33 ರನ್‌ ಗಳಿಸಿ ಮಿಂಚಿದರು. ಸ್ಫೋಟಕ ಬ್ಯಾಟಿಂಗ್‌ ಮೂಲಕ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ ಸುರೇಶ ಕಡ್ಲಿಮಟ್ಟಿ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

ಆರ್‌ಸಿಬಿಗೆ ಸೋಲು; ವಿನ್ನರ್ಸ್‌ ಸೆಮಿಫೈನಲ್‌ಗೆ

ಇದಕ್ಕೂ ಮುನ್ನ ನಡೆದ ಮೂರನೇ ಪಂದ್ಯದಲ್ಲಿ ಆರ್‌ಸಿಬಿ ತಂಡವನ್ನು 8 ವಿಕೆಟ್‌ಗಳಿಂದ ಮಣಿಸಿದ ವಿನ್ನರ್ಸ್‌ ತಂಡ ಸೆಮಿಫೈನಲ್‌ಗೆ ಲಗ್ಗೆ ಇಟ್ಟಿತು. ಸತತ ಎರಡು ಪಂದ್ಯಗಳಲ್ಲಿ ಸೋಲು ಕಂಡ ಆರ್‌ಸಿಬಿ ತಂಡ ಟೂರ್ನಿಯಿಂದ ಹೊರಬಿದ್ದಿತು.

ಟಾಸ್‌ ಗೆದ್ದು ಬ್ಯಾಟಿಂಗ್‌ ಆಯ್ಕೆ ಮಾಡಿಕೊಂಡ ಆರ್‌ಸಿಬಿ ತಂಡ ನಿಗದಿತ 10 ಓವರ್‌ಗಳಲ್ಲಿ 6 ವಿಕೆಟ್‌ ನಷ್ಟಕ್ಕೆ 84 ರನ್‌ ಗಳಿಸಿತು. ವಿನಾಯಕ ಚೌಡಾಪೂರ 24 ಹಾಗೂ ಫಿರೋಜ್‌ ಮೊಮಿನ್‌ 18 ರನ್‌ ಗಳಿಸಿದರು. ವಿನ್ನರ್ಸ್‌ ಪರ ಅಶೋಕ ಹೂಗಾರ 2 ವಿಕೆಟ್‌ ಪಡೆದರೆ, ಈಶ್ವರ ತಿಪ್ಪರಡ್ಡಿ, ಬನೇಶ ಕುಲಕರ್ಣಿ ಹಾಗೂ ಪರಮೇಶ ಲಮಾಣಿ ತಲಾ ಒಂದು ವಿಕೆಟ್‌ ಪಡೆದರು.

85 ರನ್‌ಗಳ ಗುರಿ ಬೆನ್ನತ್ತಿದ ವಿನ್ನರ್ಸ್‌ ತಂಡದ ಆರಂಭಿಕ ಆಟಗಾರರಾದ ಅನಿಲ ತೆಂಬದಮನಿ ಹಾಗೂ ಅನಿಲ ಚಲವಾದಿ ತಂಡಕ್ಕೆ ಭರ್ಜರಿ ಆರಂಭ ಒದಗಿಸಿದರು. ಅನಿಲ ತೆಂಬದಮನಿ 33 ಹಾಗೂ ಅನಿಲ ಚಲವಾದಿ 31 ರನ್‌ ಗಳಿಸಿ ಅಜೇಯರಾಗುಳಿದು ತಂಡವನ್ನು 8 ವಿಕೆಟ್‌ಗಳ ಭರ್ಜರಿ ಗೆಲುವಿನತ್ತ ಕೊಂಡೊಯ್ದರು. ಆರ್‌ಸಿಬಿ ಪರ ಗೌರೀಶ ಒಂದು ವಿಕೆಟ್‌ ಪಡೆದರು. 33 ರನ್‌ ಗಳಿಸಿ ಅಜೇಯರಾಗಿದ್ದ ಅನಿಲ ತೆಂಬದಮನಿ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

ಆ.22ರಂದು ಸೆಮಿಫೈನಲ್‌, ಆ.23ಕ್ಕೆ ಫೈನಲ್‌

ಆ.22ರಂದು ರೂರಲ್‌ ಕಿಂಗ್ಸ್‌ ಹಾಗೂ ವಿನ್ನರ್ಸ್‌ ತಂಡಗಳ ನಡುವೆ ಸೆಮಿಫೈನಲ್‌ ಪಂದ್ಯ ನಡೆಯಲಿದೆ. ಈ ಪಂದ್ಯದಲ್ಲಿ ಗೆಲುವು ಸಾಧಿಸುವ ತಂಡ ಫೈನಲ್‌ಗೆ ಅರ್ಹತೆ ಪಡೆಯಲಿದೆ. ನಂತರ ನೈಟ್‌ ರೈಡರ್ಸ್‌ ಹಾಗೂ ಆರ್‌ಸಿಬಿ ನಡುವೆ ಔಪಚಾರಿಕ ಪಂದ್ಯ ನಡೆಯಲಿದೆ.

ಹೀಗಾಗಿ ರೂರಲ್‌ ಕಿಂಗ್ಸ್‌–ವಿನ್ನರ್ಸ್‌ ನಡುವಿನ ಸೆಮಿಫೈನಲ್‌ ಪಂದ್ಯದತ್ತ ಎಲ್ಲರ ಚಿತ್ತ ನೆಟ್ಟಿದ್ದು, ಗೆಲುವು ಸಾಧಿಸುವ ತಂಡ ಆ.23ರಂದು ನಡೆಯುವ ಫೈನಲ್‌ನಲ್ಲಿ ಈಗಾಗಲೇ ಫೈನಲ್‌ ಪ್ರವೇಶಿಸಿರುವ ನೈಟ್‌ ರೈಡರ್ಸ್‌ ತಂಡವನ್ನು ಎದುರಿಸಲಿದೆ.

ಗ್ರಾಮೀಣ ಅಭಿವೃದ್ಧಿಗೆ ಕಳಕಪ್ಪ ಬಂಡಿ ಕೊಡುಗೆ ಅಪಾರ

0

ವಿಜಯಸಾಕ್ಷಿ ಸುದ್ದಿ, ಡಂಬಳ: ಮಾಜಿ ಸಚಿವ ಕಳಕಪ್ಪ ಬಂಡಿ ಅವರು ಅಧಿಕಾರದಲ್ಲಿದ್ದ ಅವಧಿಯಲ್ಲಿ ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡಿ ರಸ್ತೆ, ಕುಡಿಯುವ ನೀರು, ಶಿಕ್ಷಣ, ನೀರಾವರಿ ಹಾಗೂ ಮೂಲಸೌಕರ್ಯ ಕ್ಷೇತ್ರಗಳಿಗೆ ಹಲವು ಯೋಜನೆಗಳನ್ನು ಜಾರಿಗೊಳಿಸಿದ್ದರು ಎಂದು ಬಿಜೆಪಿ ಡಂಬಳ ಮಂಡಳ ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷ ಮಲ್ಲಪ್ಪ ಮಠದ ಹೇಳಿದರು.

ಕಳಕಪ್ಪ ಬಂಡಿ ಅವರ 58ನೇ ಜನ್ಮದಿನದ ಅಂಗವಾಗಿ ಡಂಬಳ ಗ್ರಾಮದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ರೋಗಿಗಳಿಗೆ ಹಣ್ಣು ವಿತರಿಸಿ, ಆವರಣದಲ್ಲಿ ಸಸಿ ನೆಟ್ಟು ಹಾಗೂ ಅಂಗನವಾಡಿ ಮಕ್ಕಳಿಂದ ಕೇಕ್ ಕತ್ತರಿಸಿ ಹಣ್ಣು ಹಂಪಲ ವಿತರಿಸುವ ಮೂಲಕ ಆಚರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಮಲ್ಲಪ್ಪ ಮಠದ, ಗಜೇಂದ್ರಗಡ, ಮುಂಡರಗಿ ಹಾಗೂ ರೋಣ ಪಟ್ಟಣಗಳ ಅಭಿವೃದ್ಧಿಗೂ ಕಳಕಪ್ಪ ಬಂಡಿ ಅವರ ಕೊಡುಗೆ ಇದೆ ಎಂದರು.

ಮಾಜಿ ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷ ಭೀರಪ್ಪ ಬಂಡಿ, ಮುಖಂಡರಾದ ನಾಗರಾಜ ಕಾಟರಳ್ಳಿ ಹಾಗೂ ಉಮೇಶ ಅಂಕದ ಮಾತನಾಡಿ, ಬಿಜೆಪಿ ಸರ್ಕಾರದ ಅವಧಿಯಲ್ಲಿ ರೋಣ ಕ್ಷೇತ್ರಕ್ಕೆ ಶಿಕ್ಷಣ, ಕಾಲೇಜು, ರಸ್ತೆ ಸೇರಿದಂತೆ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಹೆಚ್ಚಿನ ಅನುದಾನ ದೊರಕಿಸುವಲ್ಲಿ ಕಳಕಪ್ಪ ಬಂಡಿ ಪ್ರಮುಖ ಪಾತ್ರ ವಹಿಸಿದ್ದರು ಎಂದರು.

ಯುವ ಮುಖಂಡರಾದ ಪ್ರಕಾಶ ಕೋತಂಬ್ರಿ ಹಾಗೂ ಶಿವಾನಂದ ಬಂಡಿ ಮಾತನಾಡಿ, ರೈತರು, ಬಡವರು, ಕಾರ್ಮಿಕರು ಹಾಗೂ ಹಿಂದುಳಿದ ವರ್ಗಗಳ ಸಮಸ್ಯೆಗಳಿಗೆ ಸ್ಪಂದಿಸಿದ ಕಳಕಪ್ಪ ಬಂಡಿ, ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಹಲವು ಗ್ರಾಮಗಳಿಗೆ ಅನುದಾನ ಕಲ್ಪಿಸಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಕೆ.ಕೆ. ಬಂಡಿ, ಹನಮಂತಪ್ಪ ಹಾದಿಮನಿ, ರವಿ ಕರಿಗಾರ, ಬಸವರಾಜ ಸಂಗನಾಳ, ಗವಿಯಪ್ಪ ಮಠದ, ಪುಂಡಲೀಕ ಪಾರಪ್ಪನವರ, ಪ್ರಜ್ವಲ ಮಾನೆ, ಶ್ರೀಧರ ಬಂಡಿ, ಹನಮಪ್ಪ ಬಂಡಿ, ಫಕೀರಪ್ಪ ಬಿಸಾಟಿ, ಮುದಕಪ್ಪ ಮುಳಗುಂದ ಸೇರಿದಂತೆ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

ಉದ್ಯೋಗ ಖಾತ್ರಿ ಯೋಜನೆ ಸದುಪಯೋಗಪಡಿಸಿಕೊಳ್ಳಿ: ಚಂದ್ರಶೇಖರ ಬಿ. ಕಂದಕೂರ

0

ವಿಜಯಸಾಕ್ಷಿ ಸುದ್ದಿ, ಗಜೇಂದ್ರಗಡ: ಉದ್ಯೋಗದ ಅಗತ್ಯವಿರುವ ಕೂಲಿಕಾರರು ಜಾಬ್ ಕಾರ್ಡ್ ಮಾಡಿಸಿಕೊಂಡು ಉದ್ಯೋಗ ಖಾತ್ರಿ ಯೋಜನೆಯ ಸೌಲಭ್ಯ ಪಡೆಯಬೇಕು ಎಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ ಬಿ. ಕಂದಕೂರ ಹೇಳಿದರು.

ತಾಲೂಕಿನ ಗೋಗೇರಿ ಗ್ರಾಮ ಪಂಚಾಯಿತಿ ಆವರಣದಲ್ಲಿ ಬುಧವಾರ ಜಾಬ್ ಕಾರ್ಡ್ ಮೇಳ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಆ.15ರಿಂದ ಸೆ.15ರವರೆಗೆ ತಾಲೂಕಿನಾದ್ಯಂತ ಅಭಿಯಾನ ನಡೆಯಲಿದೆ. ಜಾಬ್ ಕಾರ್ಡ್ ಇಲ್ಲದವರು ಹೊಸ ಕಾರ್ಡ್ ಮಾಡಿಸಿಕೊಳ್ಳಬಹುದು. ಕಾರ್ಡ್‌ನಲ್ಲಿ ತಿದ್ದುಪಡಿ ಅಗತ್ಯವಿದ್ದರೆ ಮಾಡಿಸಿಕೊಳ್ಳುವುದರ ಜತೆಗೆ ಇ-ಕೆವೈಸಿ ನವೀಕರಣಕ್ಕೂ ಅವಕಾಶವಿದೆ ಎಂದರು.

ಕೆಲಸದ ಅಗತ್ಯವಿರುವವರು ನಮೂನೆ-6ರಲ್ಲಿ ಅರ್ಜಿ ಸಲ್ಲಿಸಿದರೆ ಯೋಜನೆಯಡಿ ಉದ್ಯೋಗ ಒದಗಿಸಲಾಗುವುದು. ಗ್ರಾಮ ಪಂಚಾಯಿತಿ ಸಿಬ್ಬಂದಿ ಮನೆ ಮನೆಗೆ ಭೇಟಿ ನೀಡುವ ಸಂದರ್ಭದಲ್ಲಿ ಕೂಲಿಕಾರರು ಅಗತ್ಯ ಮಾಹಿತಿ ನೀಡಿ ಅಭಿಯಾನ ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.

ಯೋಜನೆಯ ಕ್ರಿಯಾಯೋಜನೆಯಲ್ಲಿ ವೈಯಕ್ತಿಕ ಫಲಾನುಭವಿಗಳಾಗಿ ಆಯ್ಕೆಯಾಗಿರುವವರು ತಕ್ಷಣ ಕಾಮಗಾರಿ ಆದೇಶ ಪಡೆದು ಕಾಮಗಾರಿ ಆರಂಭಿಸುವಂತೆ ಸಿಬ್ಬಂದಿಗೆ ಸೂಚಿಸಿದರು. ಬಳಿಕ ಕಾಯಕ ಬಂಧುಗಳು ಹಾಗೂ ಗ್ರಾಮಸ್ಥರೊಂದಿಗೆ ಸಂವಾದ ನಡೆಸಿ, ಯೋಜನೆಯಡಿ ದೊರೆಯುವ ಉದ್ಯೋಗಾವಕಾಶ ಹಾಗೂ ವಿವಿಧ ಸೌಲಭ್ಯಗಳ ಕುರಿತು ಮಾಹಿತಿ ನೀಡಿದರು.

ಇದೇ ಸಂದರ್ಭದಲ್ಲಿ ಭಾರತ್ ಜೋಡೋ ಯುವ ಸಂಘ ನೋಂದಣಿ ಕುರಿತು ಮಾಹಿತಿ ನೀಡಿದ ಕಂದಕೂರ, 18ರಿಂದ 35 ವರ್ಷದೊಳಗಿನ ಯುವಕರು ನೋಂದಣಿ ಮಾಡಿಕೊಳ್ಳಬೇಕು. ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಕನಿಷ್ಠ 100 ಯುವಕರ ನೋಂದಣಿಯಾದರೆ ಸಂಘ ರಚನೆಯಾಗಲಿದ್ದು, ಎಲ್ಲ ಸಮುದಾಯಗಳ ಯುವಕರು ಹಾಗೂ ಮಹಿಳೆಯರು ಭಾಗವಹಿಸುವಂತೆ ಕ್ರಮವಹಿಸಬೇಕು ಎಂದರು.

ಐಇಸಿ ಸಂಯೋಜಕ ಮಂಜುನಾಥ ಹಳ್ಳದ, ಕಾರ್ಯದರ್ಶಿಗಳಾದ ಎಂ.ಎಂ. ಗೋಡೆಕಾರ, ಎನ್.ಜಿ. ಭಾಗವಾನ, ಕೆ.ಬಿ. ಮಾದರ, ಡಿ.ಕೆ. ವಾಲಿಕಾರ, ಯಲ್ಲವ್ವ ಗಾರಗಿ, ನಿಂಗಪ್ಪ ಸೋಂಪೂರ, ಕಾಯಕ ಬಂಧುಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

“ಜಾಬ್ ಕಾರ್ಡ್ ಇಲ್ಲದ ಕೂಲಿಕಾರರು ಹೊಸ ಕಾರ್ಡ್ ಮಾಡಿಸಿಕೊಳ್ಳಿ, ತಿದ್ದುಪಡಿ ಹಾಗೂ ಇ-ಕೆವೈಸಿ ನವೀಕರಣಕ್ಕೂ ಅವಕಾಶವಿದೆ. ಎಲ್ಲರೂ ಅಭಿಯಾನದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಉದ್ಯೋಗ ಖಾತ್ರಿ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು.”

— ಚಂದ್ರಶೇಖರ ಬಿ. ಕಂದಕೂರ, ತಾ.ಪಂ. ಇಒ, ಗಜೇಂದ್ರಗಡ

ಗದಗ ಉತ್ಸವಕ್ಕೆ ತೆರೆ: ಶ್ರೇಷ್ಠ ಮಳಿಗೆಗಳಿಗೆ ಪ್ರಶಸ್ತಿ

0

ವಿಜಯಸಾಕ್ಷಿ ಸುದ್ದಿ, ಗದಗ: ಗದಗ ಜಿಲ್ಲಾ ವಾಣಿಜ್ಯೋದ್ಯಮ ಸಂಸ್ಥೆ, ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ, ಗ್ರಾಮೀಣ ಮತ್ತು ಸಣ್ಣ ಉದ್ಯಮ ವಿಭಾಗ ಹಾಗೂ ಜಿಲ್ಲಾ ಪಂಚಾಯಿತಿ ಆಶ್ರಯದಲ್ಲಿ ಎಪಿಎಂಸಿ ಯಾರ್ಡ್‌ನ ಸ್ವಾಮಿ ವಿವೇಕಾನಂದ ಸಭಾಭವನದಲ್ಲಿ ಆಯೋಜಿಸಿದ್ದ ‘ಗದಗ ಉತ್ಸವ-2026’ ಕೈಗಾರಿಕಾ ವಸ್ತು ಪ್ರದರ್ಶನ ಹಾಗೂ ಮಾರಾಟ ಮೇಳಕ್ಕೆ ಮಂಗಳವಾರ ತೆರೆ ಬಿದ್ದಿತು.

ಸಮಾರೋಪ ಸಮಾರಂಭದಲ್ಲಿ ಶ್ರೇಷ್ಠ ಮಳಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಹಳ್ಳಿಕೇರಿಯ ಹರ್ಷಾ ಹೋಮ್ ಪ್ರಾಡಕ್ಟ್ಸ್ ಪ್ರಥಮ, ಗದಗದ ಜಿವಿಆರ್ ಮಾರ್ಕೆಟಿಂಗ್ ದ್ವಿತೀಯ ಹಾಗೂ ತ್ರಿವೇಣಿ ಬೋಟಿಕ್ಸ್ ತೃತೀಯ ಸ್ಥಾನ ಪಡೆದವು. ಬೆಂಗಳೂರಿನ ಆ್ಯಪಲ್ ಸಾಲಟೆಕ್ಸ್ಗೆ ವಿಶೇಷ ಬಹುಮಾನ ನೀಡಲಾಯಿತು.

ಗದಗ ಅಡವೀಂದ್ರಸ್ವಾಮಿ ಮಠದ ಧರ್ಮದರ್ಶಿ ಮಹೇಶ್ವರ ಸ್ವಾಮಿಗಳು ಹಾಗೂ ಮುಖ್ಯ ಅತಿಥಿ ಅಡಿವೆಪ್ಪ ತಿರ್ಲಾಪೂರ ಪ್ರಶಸ್ತಿ ಪ್ರದಾನ ಮಾಡಿದರು. ಇದೇ ಸಂದರ್ಭದಲ್ಲಿ ಅಡುಗೆ ಸ್ಪರ್ಧೆಯ ವಿಜೇತರು, ಪ್ರಾಯೋಜಕರು, ಚೇಂಬರ್‌ನ ಮಾಜಿ ಅಧ್ಯಕ್ಷರು ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳ ಯಶಸ್ಸಿಗೆ ಶ್ರಮಿಸಿದವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ವಾಣಿಜ್ಯೋದ್ಯಮ ಸಂಸ್ಥೆ ಅಧ್ಯಕ್ಷ ಶರಣಬಸಪ್ಪ ಗುಡಿಮನಿ ವಹಿಸಿದ್ದರು. ಉತ್ಸವ ಸಮಿತಿ ಚೇರ್ಮನ್ ಮಧುಸೂದನ ಪುಣೇಕರ ಮಾತನಾಡಿದರು. ಗೌರವ ಕಾರ್ಯದರ್ಶಿ ಚನ್ನವೀರಪ್ಪ ಹುಣಶೀಕಟ್ಟಿ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ಉಪಾಧ್ಯಕ್ಷರಾದ ಜಯದೇವ ಮೆಣಸಗಿ, ಪ್ರಕಾಶ ಉಗಲಾಟ, ಸಿದ್ರಾಮಪ್ಪ ಉಮಚಗಿ, ಸಹ ಗೌರವ ಕಾರ್ಯದರ್ಶಿ ರಾಘವೇಂದ್ರ ಕಾಲವಾಡ, ಅಶೋಕ ಸಂಕಣ್ಣವರ, ಕೋಶಾಧ್ಯಕ್ಷ ಅರವಿಂದ ಕಾಮತ, ಮಂಜುನಾಥ ವೀರಲಿಂಗಯ್ಯನಮಠ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಚಂದ್ರು ಬಾಳಿಹಳ್ಳಿಮಠ ಹಾಗೂ ಮುರುಗೇಶ ಬಡ್ನಿ ನಿರೂಪಿಸಿದರು.

ಕಷ್ಟದಲ್ಲಿರುವವರಿಗೆ ನೆರವಾಗುವುದೇ ನಿಜವಾದ ಧರ್ಮ: ಬೂದೀಶ್ವರ ಮಹಾಸ್ವಾಮಿಗಳು

0

ವಿಜಯಸಾಕ್ಷಿ ಸುದ್ದಿ, ಗದಗ: ನಗರದ ಒಕ್ಕಲಗೇರಿ ಓಣಿಯ ಗ್ರಾಮ ದೇವತೆಗಳಾದ ಶ್ರೀ ದ್ಯಾಮವ್ವ ಹಾಗೂ ಶ್ರೀ ದುರ್ಗಮ್ಮ ದೇವಿಯರ ಹರಿಜಾತ್ರಾ ಮಹೋತ್ಸವದ ಮೊದಲ ದಿನದ ಸಭಾ ಕಾರ್ಯಕ್ರಮ ಭಕ್ತಿಭಾವದಿಂದ ನಡೆಯಿತು.

ಕಾರ್ಯಕ್ರಮದ ಸಾನಿಧ್ಯ ವಹಿಸಿದ್ದ ಹೊಸಳ್ಳಿ ಬೂದೀಶ್ವರ ಮಠದ ಪೂಜ್ಯ ಅಭಿನವ ಜಗದ್ಗುರು ಬೂದೀಶ್ವರ ಮಹಾಸ್ವಾಮಿಗಳು ಮಾತನಾಡಿ, ಹುಟ್ಟು-ಸಾವು ಪ್ರಕೃತಿಯ ನಿಯಮವಾಗಿದ್ದು, ಇವೆರಡರ ನಡುವಿನ ಬದುಕನ್ನು ಸಾರ್ಥಕಪಡಿಸಿಕೊಳ್ಳುವುದು ಮನುಷ್ಯನ ಕರ್ತವ್ಯ ಎಂದರು.

ಮನುಷ್ಯನಿಗೆ 84 ಲಕ್ಷ ಜೀವ ರಾಶಿಗಳಿಗಿಂತ ಭಿನ್ನವಾದ ಅರಿವಿನ ಶಕ್ತಿ ದೊರೆತಿದೆ. ಈ ಅರಿವನ್ನು ಸದುಪಯೋಗಪಡಿಸಿಕೊಂಡು ಮಾನವ ಜನ್ಮವನ್ನು ಸಾರ್ಥಕಗೊಳಿಸಬೇಕು. ದೇವರು ನಾವು ಮಾಡುವ ಪೂಜೆಯನ್ನು ಮಾತ್ರ ನೋಡುವುದಿಲ್ಲ; ನಾವು ಮಾಡುವ ಉತ್ತಮ ಕಾರ್ಯಗಳನ್ನು ಖಂಡಿತ ನೋಡುತ್ತಾನೆ. ದುಷ್ಟ ಆಲೋಚನೆಗಳನ್ನು ದೂರ ಮಾಡಿ ಪ್ರವಚನ ಆಲಿಸುವ ಮೂಲಕ ಹರಿಜಾತ್ರೆಯನ್ನು ಸಾರ್ಥಕಗೊಳಿಸಬೇಕು ಎಂದು ಅವರು ಕರೆ ನೀಡಿದರು.

ಉಪನ್ಯಾಸಕರಾಗಿ ಆಗಮಿಸಿದ್ದ ಡಾ. ಸಿದ್ಧವೀರ ಮಹಾಸ್ವಾಮಿಗಳು ಗುರುಸಿದ್ದಯ್ಯ ಹಿರೇಮಠ ಮಾತನಾಡಿ, ದ್ಯಾಮವ್ವ–ದುರ್ಗಮ್ಮ ದೇವಿಯರ ಹರಿಜಾತ್ರೆ ಹರಕೆ ತೀರಿಸುವ ಪವಿತ್ರ ದಿನವಾಗಿದೆ ಎಂದರು. ರಕ್ತಬೀಜಾಸುರನ ಸಂಹಾರ ಮಾಡಿ ಶ್ರೀದೇವಿ ಜಗಜ್ಜನನಿಯಾಗಿ ಹೊರಹೊಮ್ಮಿದ ಪರಂಪರೆಯನ್ನು ವಿವರಿಸಿದರು.

ಮನುಷ್ಯನ ಬದುಕಿನಲ್ಲಿ ವಿವಿಧ ರೀತಿಯ ಸುಖಗಳನ್ನು ಕಾಣಬಹುದು. ದೇವಸ್ಥಾನದಲ್ಲಿ ದರ್ಶನ ಪಡೆದ ಬಳಿಕ ನೀಡುವ ಬಾಳೆಹಣ್ಣಿನ ಪ್ರಸಾದದ ಸಿಪ್ಪೆ ತೆಗೆದು ಸೇವಿಸುವ ಮೂಲಕ ಒಳಗಿನ ಸುಖವನ್ನು, ಜಾತ್ರೆಯಲ್ಲಿ ಉತ್ತತ್ತಿ ಎಸೆದು ಮರಳಿ ಪಡೆದು ಸೇವಿಸುವ ಮೂಲಕ ಹೊರಗಿನ ಸುಖವನ್ನು ಹಾಗೂ ಮಠಾಧೀಶರಿಂದ ಆಶೀರ್ವಾದ ಪಡೆದು ನೀಡುವ ಕಲ್ಲುಸಕ್ಕರೆಯನ್ನು ಸೇವಿಸುವ ಮೂಲಕ ಪೂರ್ಣ ಸುಖವನ್ನು ಅನುಭವಿಸಬಹುದು ಎಂದು ಅವರು ವಿಶ್ಲೇಷಿಸಿದರು.

ಕಾರ್ಯಕ್ರಮದಲ್ಲಿ ಗದಗದ ಆಧ್ಯಾತ್ಮಿಕ ವಿದ್ಯಾಶ್ರಮದ ಪೂಜ್ಯ ಶಿವಶರಣೆ ನೀಲಮ್ಮತಾಯಿ ಅಸುಂಡಿ, ಟ್ರಸ್ಟ್ ಕಮಿಟಿ ಅಧ್ಯಕ್ಷ ಕೊಟ್ರಪ್ಪ ಕಮತರ, ಜಾತ್ರಾ ಕಮಿಟಿ ಕಾರ್ಯಾಧ್ಯಕ್ಷ ಫಕೀರಪ್ಪ ಹೆಬಸೂರ, ಕಾಂಗ್ರೆಸ್ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ನೀಲಮ್ಮ ಬೋಳನವರ, ಕಿತ್ತೂರು ಕರ್ನಾಟಕ ದಿನಪತ್ರಿಕೆ ಸಂಪಾದಕ ಮಂಜುನಾಥ ಅಬ್ಬಿಗೇರಿ, ಎಸ್‌ಎಸ್‌ಕೆ ಸಮಾಜದ ಮುಖಂಡ ಕಿಶನ ಮೆಹರವಾಡೆ, ನಗರಸಭೆ ಸದಸ್ಯೆ ಲಕ್ಷ್ಮಿ ಸಿದ್ದಮ್ಮನಹಳ್ಳಿ, ಮಾಧೂಸಾ ಮೆಹರವಾಡೆ, ಶಕುಂತಲಾ ಅಕ್ಕಿ, ಲಕ್ಷ್ಮಿ ಕಾಕಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಗೀತಾಂಜಲಿ ಗೌಡರ ಪ್ರಾರ್ಥಿಸಿದರು. ಬಾಹುಬಲಿ ಜೈನರ ಕಾರ್ಯಕ್ರಮ ನಿರೂಪಿಸಿದರು. ಪಂಚಾಕ್ಷರಿ ಅಂಗಡಿ ವಂದಿಸಿದರು.

ನಂತರ ಮಂಡ್ಯ ಹಾಗೂ ಮೈಸೂರಿನ ಸವಿತಾ ಪೂಜಾ ಕುಣಿತ ತಂಡದಿಂದ ಆಕರ್ಷಕ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

“ಹಸಿದವರಿಗೆ ಅನ್ನ, ಬಾಯಾರಿದವರಿಗೆ ನೀರು, ಮಾನ ಮುಚ್ಚಿಕೊಳ್ಳಲು ಬಟ್ಟೆ ನೀಡಿ, ಕಷ್ಟದಲ್ಲಿರುವವರಿಗೆ ನೆರವಾದಾಗ ಮಾತ್ರ ನಮ್ಮ ಜೀವನ ಸಾರ್ಥಕವಾಗುತ್ತದೆ. ನನ್ನನ್ನು ಪ್ರೀತಿಸಿದಂತೆ ಮತ್ತೊಬ್ಬರನ್ನು ಪ್ರೀತಿಸಬೇಕು. ಕಷ್ಟದ ಸಂದರ್ಭದಲ್ಲಿ ನಾವು ಮಾಡಿದ ಧರ್ಮ ಮಾತ್ರ ನಮ್ಮನ್ನು ಕಾಯುತ್ತದೆ. ಆದ್ದರಿಂದ ಧರ್ಮವಂತರಾಗಿ ಬಾಳಬೇಕು.”

— ಅಭಿನವ ಜಗದ್ಗುರು ಬೂದೀಶ್ವರ ಮಹಾಸ್ವಾಮಿಗಳು

300ಕ್ಕೂ ಹೆಚ್ಚು ಬೀದಿ ನಾಯಿಗಳು, 80 ಹಂದಿಗಳು ಸ್ಥಳಾಂತರ!

0

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಪಟ್ಟಣದಲ್ಲಿ ಹೆಚ್ಚಾಗಿದ್ದ ಬೀದಿ ನಾಯಿಗಳು ಹಾಗೂ ಹಂದಿಗಳ ಹಾವಳಿಗೆ ಕಡಿವಾಣ ಹಾಕಲು ಪುರಸಭೆ ವಿಶೇಷ ಕಾರ್ಯಾಚರಣೆ ನಡೆಸಿದ್ದು, ಎರಡು ದಿನಗಳಲ್ಲಿ 300ಕ್ಕೂ ಹೆಚ್ಚು ಬೀದಿ ನಾಯಿಗಳು ಹಾಗೂ 80 ಹಂದಿಗಳನ್ನು ಹಿಡಿದು ಸ್ಥಳಾಂತರಿಸಿದೆ.

ಇತ್ತೀಚೆಗೆ ಬೀದಿ ನಾಯಿಗಳು ಮಕ್ಕಳು, ಆಕಳ ಕರುಗಳು, ಆಡು-ಕುರಿ ಮರಿಗಳ ಮೇಲೆ ದಾಳಿ ನಡೆಸಿ ಗಾಯಗೊಳಿಸಿದ ಘಟನೆಗಳು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದ್ದವು. ಕಳೆದ ಏಳು ತಿಂಗಳಲ್ಲಿ 1,100 ನಾಯಿ ಕಡಿತ ಪ್ರಕರಣಗಳು ನಡೆದಿರುವ ಹಿನ್ನೆಲೆಯಲ್ಲಿ ಪಟ್ಟಣದ ವಿವಿಧ ಬಡಾವಣೆಗಳಲ್ಲಿ ಗುಂಪು ಗುಂಪಾಗಿ ಸಂಚರಿಸುವ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಪುರಸಭೆಗೆ ಒತ್ತಾಯಿಸಿದ್ದರು.

ಸಾರ್ವಜನಿಕರ ದೂರುಗಳಿಗೆ ಸ್ಪಂದಿಸಿದ ಪುರಸಭೆ ಮುಖ್ಯಾಧಿಕಾರಿ ಪಿ.ಕೆ. ಗುಡದಾರಿ ಅವರು ಪರಿಣಿತ ತಂಡವನ್ನು ಕರೆಯಿಸಿ ಮಂಗಳವಾರ ಹಾಗೂ ಬುಧವಾರ ವಿಶೇಷ ಕಾರ್ಯಾಚರಣೆ ನಡೆಸಿದರು. ಪಟ್ಟಣದ ಮುಖ್ಯ ಬಜಾರ್ ರಸ್ತೆ, ಕೆಂಚಲಾಪುರ ಹಳ್ಳ, ದೂದಪೀರಾಂ ದರ್ಗಾ, ಶಾದಿಮಹಲ್, ಚಿಕನ್ ಮಾರ್ಕೆಟ್, ಹೂವಿನ ಬಜಾರ್, ಶಿಗ್ಲಿ ಕ್ರಾಸ್, ಪೊಲೀಸ್ ಠಾಣೆ, ಇಂದಿರಾನಗರ, ಬಸ್ ನಿಲ್ದಾಣ, ಪುರಸಭೆ ಕಚೇರಿ, ಸೋಮೇಶ್ವರ ಗುಡಿ, ಅಂಬೇಡ್ಕರ್ ನಗರ, ಮಂಜಲಾಪುರ ಸೇರಿದಂತೆ ವಿವಿಧೆಡೆ ಕಾರ್ಯಾಚರಣೆ ನಡೆಯಿತು.

ಬೀದಿ ನಾಯಿಗಳ ಸಂಖ್ಯೆಯನ್ನು ನಿಯಂತ್ರಿಸಲು ಪಟ್ಟಣದ ತ್ಯಾಜ್ಯ ವಿಲೇವಾರಿ ಘಟಕದಲ್ಲಿ ಪ್ರತ್ಯೇಕ ಶೆಡ್ ನಿರ್ಮಿಸಿ ಸಂತಾನಹರಣ ಚಿಕಿತ್ಸೆ ನೀಡಲು ಪುರಸಭೆ ಮುಂದಾಗಿದೆ. ಈ ಸಂಬಂಧ ಟೆಂಡರ್ ಪ್ರಕ್ರಿಯೆ ಕೈಗೊಳ್ಳಲಾಗಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಪಿ.ಕೆ. ಗುಡದಾರಿ ಹಾಗೂ ಹಿರಿಯ ಆರೋಗ್ಯ ನಿರೀಕ್ಷಕ ಮಂಜುನಾಥ ಮುದಗಲ್ ತಿಳಿಸಿದ್ದಾರೆ.

ಬೀದಿ ನಾಯಿಗಳ ನಿಯಂತ್ರಣಕ್ಕೆ ನಿರಂತರ ಕಾರ್ಯಾಚರಣೆ, ಸಂತಾನಹರಣ ಚಿಕಿತ್ಸೆ ಹಾಗೂ ವೈಜ್ಞಾನಿಕ ತ್ಯಾಜ್ಯ ನಿರ್ವಹಣೆ ಅಗತ್ಯವಾಗಿದೆ. ಪುರಸಭೆಯ ಕ್ರಮಕ್ಕೆ ಸಾರ್ವಜನಿಕರಿಂದಲೂ ಸಹಕಾರ ದೊರೆತರೆ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಸಾಧ್ಯವಾಗಲಿದೆ. ಸದ್ಯದ ಕಾರ್ಯಾಚರಣೆಯಿಂದ ಸಾರ್ವಜನಿಕರು ಕೊಂಚ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದು, ಪುರಸಭೆ ನಿರಂತರ ನಿಗಾವಹಿಸಿ ಕ್ರಮ ಕೈಗೊಳ್ಳಬೇಕು ಎಂಬುದು ಸಾರ್ವಜನಿಕರ ಒತ್ತಾಸೆಯಾಗಿದೆ.

ಗುತ್ತಿಗೆ ಕಾರ್ಮಿಕ ಪದ್ಧತಿ ರದ್ದುಪಡಿಸಿ ನೇರ ವೇತನ ಜಾರಿಗೊಳಿಸಿ

0

ವಿಜಯಸಾಕ್ಷಿ ಸುದ್ದಿ, ಬೆಂಗಳೂರು: ಗುತ್ತಿಗೆ, ಹೊರಗುತ್ತಿಗೆ, ದಿನಗೂಲಿ ಹಾಗೂ ತಾತ್ಕಾಲಿಕ ಕಾರ್ಮಿಕ ಪದ್ಧತಿಯನ್ನು ರದ್ದುಪಡಿಸಿ, ದೀರ್ಘಕಾಲದಿಂದ ಸೇವೆ ಸಲ್ಲಿಸುತ್ತಿರುವ ಕಾರ್ಮಿಕರನ್ನು ಖಾಯಂಗೊಳಿಸಬೇಕು. ಗುತ್ತಿಗೆ ಹಾಗೂ ಹೊರಗುತ್ತಿಗೆ ಕಾರ್ಮಿಕರಿಗೆ ನೇರ ವೇತನ ಪಾವತಿ ವ್ಯವಸ್ಥೆ ಜಾರಿಗೊಳಿಸಬೇಕು ಎಂದು ಆಗ್ರಹಿಸಿ ಆಲ್ ಇಂಡಿಯಾ ಸೆಂಟ್ರಲ್ ಕೌನ್ಸಿಲ್ ಆಫ್ ಟ್ರೇಡ್ ಯೂನಿಯನ್ಸ್ (ಎಐಸಿಸಿಟಿಯು) ರಾಜ್ಯಮಟ್ಟದ ಪ್ರತಿಭಟನೆ ನಡೆಸಿತು.

ಎಐಸಿಸಿಟಿಯು ರಾಷ್ಟ್ರೀಯ ಉಪಾಧ್ಯಕ್ಷ ಕ್ಲಿಫ್ಟನ್ ಡಿ’ರೋಜಾರಿಯೊ ಮಾತನಾಡಿ, ಸರ್ಕಾರಿ ಕಚೇರಿಗಳು, ಕಾರ್ಖಾನೆಗಳು, ಆಸ್ಪತ್ರೆಗಳು ಹಾಗೂ ಸಾರ್ವಜನಿಕ ವಲಯದ ಸಂಸ್ಥೆಗಳಲ್ಲಿ ಹಲವು ವರ್ಷಗಳಿಂದ ನಿರಂತರ ಕೆಲಸ ಮಾಡುತ್ತಿರುವ ಗುತ್ತಿಗೆ ಕಾರ್ಮಿಕರಿಗೆ ಉದ್ಯೋಗ ಭದ್ರತೆ ಮತ್ತು ಸಾಮಾಜಿಕ ಭದ್ರತೆ ದೊರೆಯುತ್ತಿಲ್ಲ. ನಿಯಮಿತ ನೌಕರರು ನಿರ್ವಹಿಸುವ ಸಮಾನ ಕೆಲಸಕ್ಕೆ ಸಮಾನ ವೇತನ ಸೇರಿದಂತೆ ಕಾನೂನುಬದ್ಧ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದು ಒತ್ತಾಯಿಸಿದರು.

ರಾಜ್ಯ ಪ್ರಧಾನ ಕಾರ್ಯದರ್ಶಿ ಮೈತ್ರಿ ಕೃಷ್ಣನ್ ಮಾತನಾಡಿ, ಮೇ 22ರಂದು ಅಧಿಸೂಚನೆಗೊಂಡ ಪರಿಷ್ಕೃತ ಕನಿಷ್ಠ ವೇತನವನ್ನು ಯಾವುದೇ ಕಾರಣಕ್ಕೂ ತಡೆಹಿಡಿಯದೆ ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು. ಕನಿಷ್ಠ ವೇತನಕ್ಕಿಂತ ಕಡಿಮೆ ವೇತನ ಪಾವತಿಸುವ ಉದ್ಯೋಗದಾತರ ವಿರುದ್ಧ ತಕ್ಷಣ ತಪಾಸಣೆ ನಡೆಸಿ, ಬಾಕಿ ವೇತನ ವಸೂಲಿ ಹಾಗೂ ಕಾನೂನು ಕ್ರಮ ಕೈಗೊಳ್ಳಬೇಕು ಎಂದರು.

ನಿರಂತರವಾಗಿ ಏರುತ್ತಿರುವ ಜೀವನ ವೆಚ್ಚವನ್ನು ಪರಿಗಣಿಸಿ ಕಾರ್ಮಿಕರ ಕನಿಷ್ಠ ವೇತನವನ್ನು ತಿಂಗಳಿಗೆ ₹42 ಸಾವಿರಕ್ಕೆ ಪರಿಷ್ಕರಿಸಬೇಕು. ಎಲ್ಲ ಅರ್ಹ ಗುತ್ತಿಗೆ ಹಾಗೂ ಹೊರಗುತ್ತಿಗೆ ಕಾರ್ಮಿಕರಿಗೆ ಇಎಸ್‌ಐ ಸೌಲಭ್ಯ ಕಲ್ಪಿಸಿ, ಇಎಸ್‌ಐ ವೇತನ ಮಿತಿಯನ್ನು ಸಮರ್ಪಕವಾಗಿ ಪರಿಷ್ಕರಿಸಲು ಕೇಂದ್ರ ಸರ್ಕಾರದ ಮೇಲೆ ರಾಜ್ಯ ಸರ್ಕಾರ ಒತ್ತಡ ಹೇರಬೇಕು ಎಂದು ಆಗ್ರಹಿಸಿದರು.

ಕಾರ್ಮಿಕರಿಗೆ ಉದ್ಯೋಗ ಹಾಗೂ ಸಾಮಾಜಿಕ ಭದ್ರತೆ, ಆರೋಗ್ಯ, ಹೆರಿಗೆ, ಪಿಂಚಣಿ ಸೌಲಭ್ಯ, ಮಹಿಳಾ ಕಾರ್ಮಿಕರಿಗೆ ಸುರಕ್ಷಿತ ಕೆಲಸದ ವಾತಾವರಣ ಹಾಗೂ ಸಂಘಟನೆಯ ಹಕ್ಕುಗಳನ್ನು ಖಾತರಿಪಡಿಸಬೇಕು ಎಂಬುದು ಸೇರಿದಂತೆ ಹಲವು ಬೇಡಿಕೆಗಳನ್ನು ಪ್ರತಿಭಟನಾಕಾರರು ಮುಂದಿಟ್ಟರು.

ಅಪ್ಪಣ್ಣ, ನಿರ್ಮಲಾ, ನಾಗರಾಜ ಪೂಜಾರ್, ಮೋಹನ್, ರಾಮಣ್ಣ ವಿಟ್ಲ ಸೇರಿದಂತೆ ಕಾರ್ಮಿಕ ಮುಖಂಡರು ಮಾತನಾಡಿದರು. ಕೆ. ನಾಗಲಿಂಗಸ್ವಾಮಿ, ಅಜೀಜ್ ಜಾಗೀರ್ದಾರ್, ಕೇಶವ ನಾಯಕ್, ಅಶೋಕಗೌಡ, ಮಾಯಮ್ಮ, ಪರಶುರಾಮ, ಉಮಾ, ಭಾನುಪ್ರಕಾಶ್, ಬಸವರಾಜ ಎಂ., ಗೌರಿ, ಚಂದ್ರಶೇಖರ್ ಶಿರುಗುಪ್ಪಿ ಸೇರಿದಂತೆ ವಿವಿಧ ಜಿಲ್ಲೆಗಳ ಕಾರ್ಮಿಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

“ಕಾರ್ಮಿಕರ ನ್ಯಾಯಯುತ ಬೇಡಿಕೆಗಳನ್ನು ಸರ್ಕಾರ ನಿರ್ಲಕ್ಷಿಸಿದರೆ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು.”

— ಎಐಸಿಸಿಟಿಯು ಮುಖಂಡರು

ಹಾಲು ಮಣ್ಣುಪಾಲು ಮಾಡಬೇಡಿ: ಡಾ. ತೋಂಟದ ಸಿದ್ಧರಾಮ ಮಹಾಸ್ವಾಮಿಗಳು

0

ವಿಜಯಸಾಕ್ಷಿ ಸುದ್ದಿ, ಗದಗ: ಬಸವಣ್ಣನವರ ಆದರ್ಶಗಳನ್ನು ಪಾಲಿಸುವ ಮೂಲಕ ಅರ್ಥಪೂರ್ಣವಾಗಿ ಬಸವ ಪಂಚಮಿ ಆಚರಿಸುತ್ತಿರುವುದು ಸಂತಸದ ಸಂಗತಿ. ನಾಗರ ಪಂಚಮಿಯಂದು ಕಲ್ಲು ನಾಗರಕ್ಕೆ ಹಾಲೆರೆದು ಪೌಷ್ಟಿಕ ಆಹಾರವನ್ನು ವ್ಯರ್ಥ ಮಾಡುವ ಬದಲು ಅಗತ್ಯವಿರುವವರಿಗೆ ಹಂಚಬೇಕು ಎಂದು ಜಗದ್ಗುರು ಡಾ. ತೋಂಟದ ಸಿದ್ಧರಾಮ ಮಹಾಸ್ವಾಮಿಗಳು ಹೇಳಿದರು.

ನಗರದ ಬ್ಯಾಂಕರ್ಸ್ ಕಾಲೋನಿಯ ಜೀವನ ಸಂಧ್ಯಾ ಸುಖಾಲಯ ವೃದ್ಧಾಶ್ರಮದಲ್ಲಿ ಬಸವದಳ, ಬಸವ ಕೇಂದ್ರ, ಲಿಂಗಾಯತ ಪ್ರಗತಿಶೀಲ ಸಂಸ್ಥೆ, ಶರಣ ಸಾಹಿತ್ಯ ಪರಿಷತ್, ಕದಳಿವೇದಿಕೆ, ಜಾಗತಿಕ ಲಿಂಗಾಯತ ಮಹಾಸಭೆ ಹಾಗೂ ಹಡಪದ ಲಿಂಗಮ್ಮ ಮಹಿಳಾ ಸಂಘಗಳ ಸಂಯುಕ್ತ ಆಶ್ರಯದಲ್ಲಿ ಬಸವ ಪಂಚಮಿ ಅಂಗವಾಗಿ ಹಮ್ಮಿಕೊಂಡಿದ್ದ ಹಾಲುಣ್ಣಿಸುವ ಕಾರ್ಯಕ್ರಮದಲ್ಲಿ ವೃದ್ಧರಿಗೆ ಹಾಲು ವಿತರಿಸಿ ಅವರು ಆಶೀರ್ವಚನ ನೀಡಿದರು.

ನಾಗರ ಪಂಚಮಿಯಂದು ಕಲ್ಲು ನಾಗರಕ್ಕೆ ಹಾಲೆರೆದು ಲಕ್ಷಾಂತರ ಲೀಟರ್ ಹಾಲು ಮಣ್ಣುಪಾಲಾಗುತ್ತಿದೆ. ಬಸವಣ್ಣನವರು ಸುಮಾರು 900 ವರ್ಷಗಳ ಹಿಂದೆಯೇ ಈ ಅರ್ಥಹೀನ ಆಚರಣೆಯನ್ನು ಪ್ರಶ್ನಿಸಿ, “ಕಲ್ಲನಾಗರ ಕಂಡರೆ ಹಾಲನೆರೆಯವರೆಂಬರು, ದಿಟ ನಾಗರ ಕಂಡರೆ ಕೊಲ್ಲೆಂಬರಯ್ಯ” ಎಂದು ವಚನದ ಮೂಲಕ ಜಾಗೃತಿ ಮೂಡಿಸಿದ್ದರು. ಅವರ ವಿಚಾರಧಾರೆಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡು ಮೂಢನಂಬಿಕೆ ಹಾಗೂ ಅರ್ಥಹೀನ ಆಚರಣೆಗಳಿಂದ ದೂರವಾಗಬೇಕು ಎಂದರು.

ಕಾರ್ಯಕ್ರಮದಲ್ಲಿ ವೃದ್ಧಾಶ್ರಮದ ಅಧ್ಯಕ್ಷ ಹರೀಶ ಮುನವರ, ಟ್ರಸ್ಟಿಗಳಾದ ವೀರೇಂದ್ರ ಪದಮಸಿ, ವಿಪುಲ ಲೋಡಾಯಿ, ಹಿತೇಂದ್ರ ವೀರಾ, ವ್ಯವಸ್ಥಾಪಕಿ ಲಕ್ಷ್ಮೀ, ಬಸವ ಕೇಂದ್ರದ ಕಾರ್ಯದರ್ಶಿ ಎಸ್.ಎಂ. ಕವಳಿಕಾಯಿ, ಲಿಂಗಾಯತ ಪ್ರಗತಿಶೀಲ ಸಂಘದ ಅಧ್ಯಕ್ಷ ಡಾ. ಉಮೇಶ ಪುರದ, ಬಸವದಳದ ಅಧ್ಯಕ್ಷ ವಿ.ಕೆ. ಕರಿಗೌಡ್ರ ಸೇರಿದಂತೆ ವಿವಿಧ ಬಸವಪರ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಬಸವಾಭಿಮಾನಿಗಳು ಉಪಸ್ಥಿತರಿದ್ದರು. ಎಂ.ಬಿ. ಲಿಂಗದಾಳ ಹಾಲಿನ ದಾಸೋಹ ಸೇವೆ ಸಲ್ಲಿಸಿದರು.

ಬಳಿಕ ಜಿಲ್ಲಾ ಆಸ್ಪತ್ರೆಗೆ ತೆರಳಿ ಒಳರೋಗಿಗಳಿಗೆ ಹಾಲು ಹಾಗೂ ಬಿಸ್ಕೀಟ್ ವಿತರಿಸಲಾಯಿತು. ನಂತರ ಭೀಷ್ಮ ಕೆರೆ ಆವರಣದಲ್ಲಿರುವ 116 ಅಡಿ ಎತ್ತರದ ಬಸವಣ್ಣನವರ ಮೂರ್ತಿ ಎದುರು ವಚನ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಸಮಾಪ್ತಿಗೊಂಡಿತು.

“ಹಾಲು ಅತ್ಯಮೂಲ್ಯ ಪೌಷ್ಟಿಕ ಆಹಾರ. ಅದನ್ನು ವ್ಯರ್ಥ ಮಾಡದೆ ಅಗತ್ಯವಿರುವವರಿಗೆ ನೀಡುವ ಮೂಲಕ ಬಸವಣ್ಣನವರ ಕಾಯಕ-ದಾಸೋಹದ ಆಶಯವನ್ನು ಪಾಲಿಸಬೇಕು.”

— ಜ. ಡಾ. ತೋಂಟದ ಸಿದ್ಧರಾಮ ಶ್ರೀಗಳು

ಶ್ರೀರಂಗನಾಥಸ್ವಾಮಿ ದೇವಾಲಯಕ್ಕೆ ₹66.78 ಲಕ್ಷ ಮೌಲ್ಯದ ಚಿನ್ನದ ಅಷ್ಟಲಕ್ಷ್ಮಿ ಕಲಶ ಕೊಡುಗೆ!

0

ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣದ ಇತಿಹಾಸ ಪ್ರಸಿದ್ಧ ಶ್ರೀರಂಗನಾಥಸ್ವಾಮಿ ದೇವಾಲಯಕ್ಕೆ ಟಿವಿಎಸ್ ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ವೇಣು ಶ್ರೀನಿವಾಸನ್ ಅವರು ₹66.78 ಲಕ್ಷ ಮೌಲ್ಯದ ಚಿನ್ನದ ಅಷ್ಟಲಕ್ಷ್ಮಿ ಕಲಶವನ್ನು ಕೊಡುಗೆಯಾಗಿ ನೀಡಿದ್ದಾರೆ.

ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಉಮಾ ಅವರಿಗೆ ಚಿನ್ನದ ಕಲಶವನ್ನು ಹಸ್ತಾಂತರಿಸಲಾಯಿತು. ಕಲಶದ ಸುತ್ತಲೂ ಅಷ್ಟಲಕ್ಷ್ಮಿಯರ ಚಿತ್ರಗಳನ್ನು ಕೆತ್ತಲಾಗಿದ್ದು, 398.580 ಗ್ರಾಂ ಶುದ್ಧ ಬಂಗಾರದಿಂದ ಕಲಶವನ್ನು ನಿರ್ಮಿಸಲಾಗಿದೆ.

ಈ ಸಂದರ್ಭದಲ್ಲಿ ಮಾತನಾಡಿದ ವೇಣು ಶ್ರೀನಿವಾಸನ್, ಸುಮಾರು 27 ವರ್ಷಗಳ ಹಿಂದೆ ಶ್ರೀರಂಗನಾಥಸ್ವಾಮಿ ದೇವಾಲಯಕ್ಕೆ ಭೇಟಿ ನೀಡಬೇಕು ಎಂಬ ಆಸೆ ಮೂಡಿತ್ತು. ಆದರೆ ಅಂದು ಸಾಧ್ಯವಾಗಿರಲಿಲ್ಲ. ಇದೀಗ ಕನಸಿನಲ್ಲಿ ಶ್ರೀರಂಗನಾಥಸ್ವಾಮಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ದೇವಾಲಯಕ್ಕೆ ಆಗಮಿಸಿ ಸೇವೆ ಸಲ್ಲಿಸುವ ಅವಕಾಶ ದೊರೆತಿದೆ ಎಂದು ಹೇಳಿದರು.

ಭಕ್ತಿಯ ಸಂಕೇತವಾಗಿ ದೇವಾಲಯಕ್ಕೆ ಚಿನ್ನದ ಅಷ್ಟಲಕ್ಷ್ಮಿ ಕಲಶವನ್ನು ಸಮರ್ಪಿಸಿರುವುದಾಗಿ ಅವರು ತಿಳಿಸಿದರು.

ಇತಿಹಾಸ ಪ್ರಸಿದ್ಧ ಶ್ರೀರಂಗನಾಥಸ್ವಾಮಿ ದೇವಾಲಯಕ್ಕೆ ಚಿನ್ನದ ಕಲಶ ಕೊಡುಗೆಯಾಗಿ ನೀಡಿರುವುದು ಭಕ್ತರ ಗಮನ ಸೆಳೆದಿದೆ.

ರಸ್ತೆ ಗುಂಡಿ ತಪ್ಪಿಸಲು ಹೋಗಿ ಬೈಕ್‌ಗೆ ಟ್ಯಾಂಕರ್ ಡಿಕ್ಕಿ: ಕೂದಲೆಳೆ ಅಂತರದಲ್ಲಿ ಪಾರಾದ ಸವಾರ

0

ಬೆಂಗಳೂರು: ನಗರದಲ್ಲಿ ರಸ್ತೆ ಗುಂಡಿಗಳ ಅವಾಂತರ ಮುಂದುವರಿದಿದ್ದು, ರಸ್ತೆ ಗುಂಡಿ ತಪ್ಪಿಸಲು ಹೋಗುತ್ತಿದ್ದ ಬೈಕ್ ಸವಾರನಿಗೆ ಹಿಂಬದಿಯಿಂದ ಟ್ಯಾಂಕರ್ ಡಿಕ್ಕಿ ಹೊಡೆದಿರುವ ಘಟನೆ ವರ್ತೂರಿನ ಗುಂಜೂರು ಬಳಿ ನಡೆದಿದೆ.

ರಸ್ತೆಯಲ್ಲಿ ಗುಂಡಿಗಳನ್ನು ತಪ್ಪಿಸಿಕೊಂಡು ಬೈಕ್ ಚಲಾಯಿಸುತ್ತಿದ್ದ ವೇಳೆ ಹಿಂಬದಿಯಿಂದ ವೇಗವಾಗಿ ಬಂದ ಟ್ಯಾಂಕರ್ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ತಕ್ಷಣ ಬೈಕ್‌ನಿಂದ ಜಿಗಿದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಇನ್ನು ಅಪಘಾತಕ್ಕೆ ಕಾರಣವಾದ ಟ್ಯಾಂಕರ್‌ಗೆ ನಂಬರ್ ಪ್ಲೇಟ್ ಕೂಡ ಇರಲಿಲ್ಲ ಎನ್ನಲಾಗಿದೆ. ಅಪಘಾತದ ಬಳಿಕ ಟ್ಯಾಂಕರ್ ಚಾಲಕ ವಾಹನ ನಿಲ್ಲಿಸದೆ ತೆರಳಲು ಯತ್ನಿಸಿದ್ದು, ಇತರ ವಾಹನ ಸವಾರರು ಟ್ಯಾಂಕರ್‌ನ್ನು ಬೆನ್ನಟ್ಟಿ ಹಿಡಿದಿದ್ದಾರೆ.

ವಾಹನವನ್ನು ಪರಿಶೀಲಿಸಿದಾಗ ಚಾಲಕನ ಬಳಿ ಡ್ರೈವಿಂಗ್ ಲೈಸೆನ್ಸ್ ಕೂಡ ಇಲ್ಲದೆ ವಾಹನ ಚಲಾಯಿಸುತ್ತಿದ್ದ ವಿಷಯ ಬೆಳಕಿಗೆ ಬಂದಿದೆ ಎನ್ನಲಾಗಿದೆ.

ರಸ್ತೆ ಗುಂಡಿಗಳ ವಿರುದ್ಧ ಸಾರ್ವಜನಿಕರ ಆಕ್ರೋಶ:

ಬೆಂಗಳೂರು ನಗರದಲ್ಲಿ ರಸ್ತೆ ಗುಂಡಿಗಳಿಂದಾಗಿ ಅಪಘಾತಗಳು ಸಂಭವಿಸುತ್ತಿದ್ದು, ಕೆಲವರು ಪ್ರಾಣ ಕಳೆದುಕೊಂಡಿರುವ ಘಟನೆಗಳೂ ನಡೆದಿವೆ. ಆದರೂ ರಸ್ತೆ ಗುಂಡಿಗಳನ್ನು ಮುಚ್ಚುವಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಸ್ತೆ ಗುಂಡಿ ಮುಚ್ಚಲು ಕೋಟ್ಯಂತರ ರೂಪಾಯಿ ಹಣ ಬಿಡುಗಡೆಯಾಗುತ್ತಿದ್ದರೂ, ಗುಂಡಿಗಳು ಮಾತ್ರ ಹಾಗೆಯೇ ಉಳಿದಿವೆ. ಈ ಹಣ ಎಲ್ಲಿ ಹೋಗುತ್ತಿದೆ ಎಂದು ಸಾರ್ವಜನಿಕರು ಪ್ರಶ್ನಿಸಿದ್ದಾರೆ.

ಗುಂಜೂರು ಭಾಗದಲ್ಲಿ ಅಪಘಾತಕ್ಕೆ ಕಾರಣವಾಗಿರುವ ರಸ್ತೆ ಗುಂಡಿಗಳನ್ನು ಕೂಡಲೇ ಮುಚ್ಚಬೇಕು. ಜೊತೆಗೆ ನಂಬರ್ ಪ್ಲೇಟ್ ಇಲ್ಲದೆ ಹಾಗೂ ಪರವಾನಗಿ ಇಲ್ಲದ ಚಾಲಕರಿಂದ ವಾಹನ ಚಲಾಯಿಸುವುದನ್ನು ತಡೆಯಲು ಅಧಿಕಾರಿಗಳು ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.