ಘಾಜಿಯಾಬಾದ್: ಏಷ್ಯನ್ ಪ್ಯಾರಾ ಗೇಮ್ಸ್ಗೆ ಅರ್ಹತೆ ಪಡೆದಿದ್ದ ರಾಷ್ಟ್ರೀಯ ಮಟ್ಟದ ಪ್ಯಾರಾ ಅಥ್ಲೀಟ್ ಚಿರಾಗ್ ತ್ಯಾಗಿ (25) ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಉತ್ತರ ಪ್ರದೇಶದ ಘಾಜಿಯಾಬಾದ್ನಲ್ಲಿ ನಡೆದಿದೆ. ಪ್ರಕರಣ ಸಂಬಂಧ ಅವರ ಸ್ನೇಹಿತನನ್ನು ಪೊಲೀಸರು ಬಂಧಿಸಿದ್ದು, ತನಿಖೆ ಮುಂದುವರಿದಿದೆ.
ದೇಶದ ಭರವಸೆಯ ಪ್ಯಾರಾ ಅಥ್ಲೀಟ್ಗಳಲ್ಲಿ ಒಬ್ಬರಾಗಿದ್ದ ಚಿರಾಗ್ ತ್ಯಾಗಿ, ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ರಾಷ್ಟ್ರೀಯ ಪ್ಯಾರಾ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್ನಲ್ಲಿ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗೆದ್ದಿದ್ದರು. ಅಲ್ಲದೆ, ಅಕ್ಟೋಬರ್ನಲ್ಲಿ ಜಪಾನ್ನಲ್ಲಿ ನಡೆಯಲಿರುವ ಪ್ಯಾರಾ ಏಷ್ಯನ್ ಗೇಮ್ಸ್ಗೆ ಅರ್ಹತೆ ಪಡೆದಿದ್ದರು.
ಬುಧವಾರ ಬೆಳಗ್ಗೆ ಚಿರಾಗ್ ತಮ್ಮ ಕುಟುಂಬದವರಿಗೆ ಕರೆ ಮಾಡಿ ಮಧ್ಯಾಹ್ನ 3.30ರೊಳಗೆ ಮನೆಗೆ ಬರುವುದಾಗಿ ತಿಳಿಸಿದ್ದರು. ಆದರೆ ನಂತರ ಅವರ ಮೊಬೈಲ್ ಸ್ವಿಚ್ ಆಫ್ ಆಗಿದ್ದು, ಯಾವುದೇ ಸಂಪರ್ಕ ಸಾಧ್ಯವಾಗಿರಲಿಲ್ಲ. ಆತಂಕಗೊಂಡ ಕುಟುಂಬ ಸದಸ್ಯರು ಪೊಲೀಸರಿಗೆ ದೂರು ನೀಡಿದ್ದರು.
ದೂರಿನ ಆಧಾರದ ಮೇಲೆ ತನಿಖೆ ಆರಂಭಿಸಿದ ಪೊಲೀಸರು, ಶನಿವಾರ ಘಾಜಿಯಾಬಾದ್ನ ಸಾಯಿ ಕುಂಜ್ ಪ್ರದೇಶದಲ್ಲಿ ಚಿರಾಗ್ ಅವರ ಮೃತದೇಹವನ್ನು ಪತ್ತೆಹಚ್ಚಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಅವರಿಗೆ ಗುಂಡು ಹಾರಿಸಿ ಹತ್ಯೆ ಮಾಡಿರುವುದು ಬೆಳಕಿಗೆ ಬಂದಿದೆ.
ತನಿಖೆ ವೇಳೆ ಮಹತ್ವದ ಮಾಹಿತಿ ಬಹಿರಂಗವಾಗಿದ್ದು, ಚಿರಾಗ್ ಅವರ ಸ್ನೇಹಿತ ಯಶ್ ಖಾಟಿಕ್ ಈ ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ. ಇಬ್ಬರೂ ಹಲವು ವರ್ಷಗಳಿಂದ ದೃಷ್ಟಿಹೀನರ ವಿಭಾಗದ ಕ್ರೀಡಾಪಟುಗಳಾಗಿ ಸ್ಪರ್ಧಿಸುತ್ತಿದ್ದರು. ಜೊತೆಗೆ ಒಟ್ಟಿಗೆ ತರಬೇತಿ ಪಡೆಯುತ್ತಾ ಒಂದೇ ಕೊಠಡಿಯಲ್ಲಿ ವಾಸಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಯಶ್ ಖಾಟಿಕ್ ಅವರ ದಾಖಲೆಗಳ ಪರಿಶೀಲನೆ ಕುರಿತು ಚಿರಾಗ್ ಈ ಹಿಂದೆ ದೂರು ನೀಡಿದ್ದರು ಎನ್ನಲಾಗಿದೆ. ಈ ವಿಚಾರದಿಂದ ಯಶ್ ಅನರ್ಹಗೊಂಡಿದ್ದಾನೆ ಎಂದು ತಿಳಿದುಬಂದಿದೆ. ಇದೇ ದ್ವೇಷದ ಹಿನ್ನೆಲೆ ಚಿರಾಗ್ ಅವರನ್ನು ನಿರ್ಜನ ಪ್ರದೇಶಕ್ಕೆ ಕರೆಸಿಕೊಂಡು ಬೆನ್ನಿಗೆ ಗುಂಡು ಹಾರಿಸಿ ಹತ್ಯೆ ಮಾಡಿದ್ದಾನೆ ಎಂದು ಪೊಲೀಸರು ಆರೋಪಿಸಿದ್ದಾರೆ.
ಪ್ರಕರಣ ಸಂಬಂಧ ಆರೋಪಿಯನ್ನು ಬಂಧಿಸಲಾಗಿದ್ದು, ಹತ್ಯೆಗೆ ಬಳಸಿದ ಪಿಸ್ತೂಲ್ ಪತ್ತೆಗಾಗಿ ಶೋಧ ಕಾರ್ಯ ಮುಂದುವರಿದಿದೆ. ಘಟನೆಯಲ್ಲಿ ಇತರರ ಪಾತ್ರವಿದೆಯೇ ಎಂಬುದರ ಬಗ್ಗೆಯೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮರಣೋತ್ತರ ಪರೀಕ್ಷೆಯ ವರದಿ ಬಂದ ಬಳಿಕ ಪ್ರಕರಣದ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

