Home Blog

ಜಿರಳೆ ಕಂಡರೆ ಏಕೆ ಹೆದರುತ್ತಾರೆ? ಮಹಿಳೆಯರಲ್ಲಿ ಈ ಭಯ ಹೆಚ್ಚಿರಲು ಕಾರಣವೇನು? ಇಲ್ಲಿದೆ ತಜ್ಞರ ವಿವರಣೆ

0

ಪ್ರತಿಯೊಬ್ಬರಿಗೂ ಒಂದಲ್ಲೊಂದು ರೀತಿಯ ಭಯ ಇರುತ್ತದೆ. ಕೆಲವರಿಗೆ ಕತ್ತಲೆ, ಕೆಲವರಿಗೆ ಎತ್ತರ, ಇನ್ನು ಕೆಲವರಿಗೆ ನೀರು ಅಥವಾ ಹಾವುಗಳೆಂದರೆ ಭಯ. ಇದೇ ರೀತಿ ಅನೇಕ ಮಂದಿಗೆ, ವಿಶೇಷವಾಗಿ ಕೆಲ ಮಹಿಳೆಯರಿಗೆ ಜಿರಳೆಗಳನ್ನು ಕಂಡರೆ ಭಯವಾಗುವುದು ಸಾಮಾನ್ಯ.

ಆದರೆ ಈ ಭಯದ ಹಿಂದೆ ಮನೋವೈಜ್ಞಾನಿಕ ಕಾರಣಗಳಿವೆ ಎಂದು ತಜ್ಞರು ಹೇಳುತ್ತಾರೆ.

ಮನೋವಿಜ್ಞಾನದ ಪ್ರಕಾರ, ಜಿರಳೆಗಳ ಬಗ್ಗೆ ಇರುವ ತೀವ್ರ ಭಯವನ್ನು ‘ಕತ್ಸರಿಡಾಫೋಬಿಯಾ’ ಎಂದು ಕರೆಯಲಾಗುತ್ತದೆ. ಇದು ಒಂದು ರೀತಿಯ ಫೋಬಿಯಾ ಆಗಿದ್ದು, ಜಿರಳೆಯನ್ನು ಕಂಡ ತಕ್ಷಣ ಕೆಲವರಲ್ಲಿ ಹೃದಯ ಬಡಿತ ಹೆಚ್ಚಾಗುವುದು, ಕೈ-ಕಾಲು ತಣ್ಣಗಾಗುವುದು, ಅತಿಯಾಗಿ ಬೆವರುವುದು ಹಾಗೂ ಕೆಲ ಕ್ಷಣ ಯೋಚಿಸುವ ಸಾಮರ್ಥ್ಯವೂ ಕುಂಠಿತವಾಗುವಂತಹ ಲಕ್ಷಣಗಳು ಕಾಣಿಸಿಕೊಳ್ಳಬಹುದು.

ತಜ್ಞರ ಪ್ರಕಾರ, ಈ ಭಯ ಹೆಚ್ಚಾಗಿ ಬಾಲ್ಯದಲ್ಲೇ ರೂಪುಗೊಳ್ಳುತ್ತದೆ. ಮನೆಯಲ್ಲಿ ಪೋಷಕರು ಅಥವಾ ಹಿರಿಯರು ಜಿರಳೆಯನ್ನು ಕಂಡು ಭಯಪಡುವುದನ್ನು ಮಕ್ಕಳು ಗಮನಿಸುತ್ತಾರೆ. ಇದರಿಂದ ಜಿರಳೆ ಅಪಾಯಕಾರಿ ಎಂಬ ಕಲ್ಪನೆ ಅವರ ಮನಸ್ಸಿನಲ್ಲಿ ಮೂಡಿ, ಕ್ರಮೇಣ ಅದು ಭಯವಾಗಿ ಬೆಳೆಯಬಹುದು.

ಇನ್ನು ಹುಡುಗಿಯರಲ್ಲಿ ಈ ಭಯ ಹೆಚ್ಚು ಕಾಣಿಸಿಕೊಳ್ಳಲು ಸಾಮಾಜಿಕ ಹಾಗೂ ಮಾನಸಿಕ ಅಂಶಗಳೂ ಕಾರಣವೆಂದು ಹೇಳಲಾಗುತ್ತದೆ. ಬಾಲ್ಯದಿಂದಲೇ ಶುಚಿತ್ವಕ್ಕೆ ಹೆಚ್ಚಿನ ಒತ್ತು ನೀಡುವ ಕಾರಣ, ಕೊಳಕು ವಾತಾವರಣದಲ್ಲಿ ವಾಸಿಸುವ ಜಿರಳೆಗಳ ಬಗ್ಗೆ ನಕಾರಾತ್ಮಕ ಭಾವನೆ ಬೆಳೆದು ಭಯ ಉಂಟಾಗುವ ಸಾಧ್ಯತೆ ಹೆಚ್ಚಿರುತ್ತದೆ.

ಜಿರಳೆಗಳ ದೈಹಿಕ ಗುಣಲಕ್ಷಣಗಳೂ ಈ ಭಯವನ್ನು ಮತ್ತಷ್ಟು ಹೆಚ್ಚಿಸುತ್ತವೆ. ಎಣ್ಣೆಯುಕ್ತ ಮೈ, ವೇಗವಾಗಿ ಓಡುವ ಸ್ವಭಾವ ಹಾಗೂ ಇದ್ದಕ್ಕಿದ್ದಂತೆ ಹಾರುವ ಗುಣ ಅನೇಕರಲ್ಲಿ ಆತಂಕವನ್ನು ಉಂಟುಮಾಡುತ್ತದೆ. ವಿಶೇಷವಾಗಿ ಅನಿರೀಕ್ಷಿತವಾಗಿ ದೇಹದ ಮೇಲೆ ಬೀಳುವ ಸಾಧ್ಯತೆ ಇರುವುದರಿಂದ ಭಯ ಮತ್ತಷ್ಟು ಹೆಚ್ಚಾಗುತ್ತದೆ.

ಜಿರಳೆಗಳು ಹಾವು ಅಥವಾ ಕಾಡುಪ್ರಾಣಿಗಳಂತೆ ನೇರವಾಗಿ ಮಾರಕವಲ್ಲದಿದ್ದರೂ, ಅವು ಕೊಳಕು ಪ್ರದೇಶಗಳಲ್ಲಿ ವಾಸಿಸುವುದರಿಂದ ವಿವಿಧ ಸೂಕ್ಷ್ಮಜೀವಿಗಳು ಮತ್ತು ಅಲರ್ಜಿನ್‌ಗಳನ್ನು ಹೊತ್ತಿರುತ್ತವೆ. ಇದರಿಂದ ಅಸ್ತಮಾ ಅಥವಾ ಉಸಿರಾಟದ ಸಮಸ್ಯೆ ಇರುವವರಿಗೆ ಆರೋಗ್ಯದ ತೊಂದರೆ ಉಂಟಾಗುವ ಸಾಧ್ಯತೆ ಇದೆ.

ಮನಶ್ಶಾಸ್ತ್ರಜ್ಞರ ಪ್ರಕಾರ, ಈ ರೀತಿಯ ಭಯವನ್ನು ಸೂಕ್ತ ಸಮಾಲೋಚನೆ ಹಾಗೂ ಕ್ರಮೇಣ ಮಾನಸಿಕವಾಗಿ ಸಿದ್ಧಗೊಳ್ಳುವ ಮೂಲಕ ಕಡಿಮೆ ಮಾಡಬಹುದು. ಜಿರಳೆಗಳಿಗೆ ಭಯಪಡುವವರನ್ನು ಹಾಸ್ಯ ಮಾಡುವುದು ಅಥವಾ ಕೀಳಾಗಿ ನೋಡುವುದು ಸರಿಯಲ್ಲ. ಇದು ಉದ್ದೇಶಪೂರ್ವಕ ಪ್ರತಿಕ್ರಿಯೆಯಲ್ಲ, ಬದಲಾಗಿ ಮನಸ್ಸಿನ ಸಹಜ ರಕ್ಷಣಾತ್ಮಕ ಪ್ರತಿಕ್ರಿಯೆಯಾಗಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಪೊಲೀಸರ ಮೇಲೆ ಹಲ್ಲೆ ಮಾಡಿ ಕೈಕೋಳದೊಂದಿಗೆ ಪರಾರಿಯಾದ ನಟೋರಿಯಸ್ ಕ್ರಿಮಿನಲ್!

ಮಂಗಳೂರು: ಮಂಗಳೂರು ನಗರದಲ್ಲಿ ಪೊಲೀಸರ ಮೇಲೆ ಹಲ್ಲೆ ನಡೆಸಿ ಕೈಕೋಳದೊಂದಿಗೆ ನಟೋರಿಯಸ್ ಕ್ರಿಮಿನಲ್ ಪರಾರಿಯಾಗಿರುವ ಘಟನೆ ರೋಜಾರಿಯೋ ಚರ್ಚ್ ರಸ್ತೆಯಲ್ಲಿ ನಡೆದಿದೆ.

ಪರಾರಿಯಾದ ಆರೋಪಿಯನ್ನು ಬಾಗಲಕೋಟೆ ಮೂಲದ ಅಲ್ತಾಫ್ ಹುಸೇನ್ ಎಂದು ಗುರುತಿಸಲಾಗಿದೆ. ಆತ ಪರಾರಿಯಾಗುವ ದೃಶ್ಯ ಸಮೀಪದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಅಲ್ತಾಫ್ ಹುಸೇನ್ ವಾಹನ ಕಳ್ಳತನ, ಸರಗಳ್ಳತನ ಹಾಗೂ ಸುಲಿಗೆ ಪ್ರಕರಣಗಳಲ್ಲಿ ಭಾಗಿಯಾಗಿದ್ದಾನೆ ಎನ್ನಲಾಗಿದೆ. ಉತ್ತರ ಪ್ರದೇಶ ಮೂಲದ ಮಹಮ್ಮದ್ ಸಿದ್ದಿಕ್ ಮತ್ತು ರವಿ ಬೌರ ಎಂಬ ಇಬ್ಬರು ಸಹಚರರೊಂದಿಗೆ ಸೇರಿ ಕೃತ್ಯ ಎಸಗುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ನಗರದ ಜಪ್ಪಿನಮೊಗರು ಪ್ರದೇಶದಲ್ಲಿ ಇತ್ತೀಚೆಗೆ ನಡೆದ ಸರಗಳ್ಳತನ ಪ್ರಕರಣದಲ್ಲೂ ಇದೇ ಗ್ಯಾಂಗ್ ಕೈವಾಡವಿದೆ ಎಂಬ ಶಂಕೆ ವ್ಯಕ್ತವಾಗಿದೆ. ಕೆಲವು ದಿನಗಳ ಹಿಂದೆ ಈ ಗ್ಯಾಂಗ್ ನಗರದ ಮೀನುಗಾರಿಕಾ ಬಂದರು ಪ್ರದೇಶಕ್ಕೆ ಮರಳಿರುವ ಖಚಿತ ಮಾಹಿತಿ ಪಡೆದ ಪೊಲೀಸರು ಮೂವರನ್ನೂ ಬಂಧಿಸಿ ಪಾಂಡೇಶ್ವರ ಪೊಲೀಸ್ ಠಾಣೆಗೆ ಕರೆತರುತ್ತಿದ್ದರು.

ಈ ವೇಳೆ ಅಲ್ತಾಫ್ ಹುಸೇನ್ ಪೊಲೀಸರನ್ನು ತಳ್ಳಿ ಹಲ್ಲೆ ನಡೆಸಿ ಕೈಕೋಳ ಸಮೇತ ಪರಾರಿಯಾಗಿದ್ದಾನೆ. ಸದ್ಯ ಪರಾರಿಯಾದ ಆರೋಪಿಯ ಬಂಧನಕ್ಕಾಗಿ ಪೊಲೀಸರು ವ್ಯಾಪಕ ಶೋಧ ಕಾರ್ಯಾಚರಣೆ ನಡೆಸಿದ್ದಾರೆ.

ಕರ್ನಾಟಕದಲ್ಲಿ ಮುಂದಿನ 7 ದಿನ ಭಾರಿ ಮಳೆ: ಕರಾವಳಿಗೆ ಯೆಲ್ಲೋ ಅಲರ್ಟ್, ಬೆಂಗಳೂರು ಸೇರಿ ಹಲವು ಜಿಲ್ಲೆಗಳಿಗೆ ಎಚ್ಚರಿಕೆ

ಬೆಂಗಳೂರು: ಮುಂಗಾರು ಮಳೆಯ ಅಬ್ಬರದ ನಡುವೆಯೇ ಕರ್ನಾಟಕದಲ್ಲಿ ಮುಂದಿನ ಏಳು ದಿನಗಳ ಕಾಲ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ. ಜೂನ್ 27ರಂದು ಬಿಡುಗಡೆಗೊಂಡ ಹವಾಮಾನ ವರದಿ ಪ್ರಕಾರ,

ರಾಜ್ಯದ ವಿವಿಧ ಭಾಗಗಳಲ್ಲಿ ಗುಡುಗು, ಸಿಡಿಲು ಹಾಗೂ ಬಿರುಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗಲಿದ್ದು, ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ವಿಶೇಷವಾಗಿ ಜೂನ್ 30ರಿಂದ ಮಳೆಯ ತೀವ್ರತೆ ಮತ್ತಷ್ಟು ಹೆಚ್ಚಾಗಲಿದೆ ಎಂದು ಇಲಾಖೆ ತಿಳಿಸಿದೆ.

ಕರಾವಳಿ ಭಾಗಗಳಾದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಿಗೆ ಮುಂದಿನ ಏಳು ದಿನಗಳ ಕಾಲ ‘ಯೆಲ್ಲೋ ಅಲರ್ಟ್’ ಘೋಷಿಸಲಾಗಿದೆ. ಜೂನ್ 27ರಿಂದ 30ರವರೆಗೆ ಭಾರಿ ಮಳೆಯೊಂದಿಗೆ ಗುಡುಗು, ಸಿಡಿಲು ಹಾಗೂ ಬಿರುಗಾಳಿ ಬೀಸುವ ಸಾಧ್ಯತೆ ಇದ್ದು, ಜುಲೈ 1ರಿಂದ 3ರವರೆಗೆ ಕೂಡ ಮಳೆಯ ಆರ್ಭಟ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಉತ್ತರ ಒಳನಾಡಿನ ಜಿಲ್ಲೆಗಳಲ್ಲೂ ಮುಂದಿನ ಒಂದು ವಾರ ಗುಡುಗು-ಸಿಡಿಲಿನೊಂದಿಗೆ ಮಳೆಯಾಗುವ ನಿರೀಕ್ಷೆಯಿದೆ. ಜೂನ್ 27ರಂದು ಕೆಲವು ಪ್ರದೇಶಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ನಂತರದ ದಿನಗಳಲ್ಲಿ ಹಗುರದಿಂದ ಸಾಧಾರಣ ಮಳೆಯೊಂದಿಗೆ ಬಿರುಗಾಳಿ ಬೀಸುವ ಮುನ್ಸೂಚನೆ ನೀಡಲಾಗಿದೆ.

ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಜೂನ್ 27 ಮತ್ತು 28ರಂದು ಗುಡುಗು, ಸಿಡಿಲು ಹಾಗೂ ಬಿರುಗಾಳಿಯೊಂದಿಗೆ ಸಾಧಾರಣ ಮಳೆಯಾಗಲಿದೆ. ಜೂನ್ 29ರಂದು ಗ್ರೀನ್ ಅಲರ್ಟ್ ಘೋಷಿಸಲಾಗಿದ್ದು, ಜೂನ್ 30ರಿಂದ ಜುಲೈ 3ರವರೆಗೆ ಹಲವು ಪ್ರದೇಶಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.

ಮಳೆ, ಗುಡುಗು ಹಾಗೂ ಸಿಡಿಲಿನ ಮುನ್ಸೂಚನೆ ಹಿನ್ನೆಲೆಯಲ್ಲಿ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಸೂಚಿಸಿದೆ. ವಿಶೇಷವಾಗಿ ರೈತರು, ಮೀನುಗಾರರು ಹಾಗೂ ಹೊರಾಂಗಣ ಕೆಲಸಗಳಲ್ಲಿ ತೊಡಗಿರುವವರು ಎಚ್ಚರಿಕೆಯಿಂದ ಇರಬೇಕು. ಗುಡುಗು-ಸಿಡಿಲಿನ ವೇಳೆ ಮರಗಳ ಕೆಳಗೆ ಆಶ್ರಯ ಪಡೆಯಬಾರದು ಹಾಗೂ ಹಳೆಯ ಅಥವಾ ಶಿಥಿಲಗೊಂಡ ಕಟ್ಟಡಗಳ ಸಮೀಪ ನಿಲ್ಲಬಾರದು ಎಂದು ಇಲಾಖೆ ಸಲಹೆ ನೀಡಿದೆ.

ಅಂಬಾನಿಯ ₹900 ಕೋಟಿ ದೇಣಿಗೆಯ ಲೆಕ್ಕ ಬಹಿರಂಗಪಡಿಸಿ: ರಾಮಮಂದಿರ ದೇಣಿಗೆ ಕುರಿತು ಬಿ.ಕೆ. ಹರಿಪ್ರಸಾದ್ ಪ್ರಶ್ನೆ

ಬೆಂಗಳೂರು: ಅಯೋಧ್ಯೆಯ ರಾಮ ಮಂದಿರ ದೇಣಿಗೆ ನಿರ್ವಹಣೆ ಕುರಿತು ಪಾರದರ್ಶಕತೆ ಇರಬೇಕು ಎಂದು ಆಗ್ರಹಿಸಿರುವ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್, ಬಿಜೆಪಿ ಹಾಗೂ ರಾಮ ಮಂದಿರ ಟ್ರಸ್ಟ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಮ ಮಂದಿರ ದೇಣಿಗೆ ವಿವಾದದ ಕುರಿತು ಶಿವಸೇನೆ ನಾಯಕ ಸಂಜಯ್ ರಾವತ್ ಎತ್ತಿರುವ ಪ್ರಶ್ನೆಗಳನ್ನು ಉಲ್ಲೇಖಿಸಿ ಪ್ರತಿಕ್ರಿಯೆ ನೀಡಿದರು.

ಇತಿಹಾಸದ ಬಗ್ಗೆ ಮಾತನಾಡುವಾಗ ಬಿಜೆಪಿ ನಾಯಕರು ಮಹಮ್ಮದ್ ಘಜ್ನಿ ಲೂಟಿ ಮಾಡಿದ್ದನ್ನು ಪದೇ ಪದೇ ಉಲ್ಲೇಖಿಸುತ್ತಾರೆ. ಆದರೆ ಘಜ್ನಿಯ ನಂತರ ದೇಶವನ್ನು ಲೂಟಿ ಮಾಡಿರುವವರು ಬಿಜೆಪಿಯವರೇ ಎಂದು ಹರಿಪ್ರಸಾದ್ ಆರೋಪಿಸಿದರು.

ಈ ಹಿಂದೆ ರಾಮ ಮಂದಿರ ನಿರ್ಮಾಣದ ಹೆಸರಿನಲ್ಲಿ ಹಣ ಸಂಗ್ರಹಿಸಲಾಗಿತ್ತು. ಉದ್ಯಮಿ ಮುಕೇಶ್ ಅಂಬಾನಿ ₹900 ಕೋಟಿ ದೇಣಿಗೆ ನೀಡಿದ್ದರು ಎಂದು ಹೇಳಲಾಗುತ್ತಿದೆ. ಆ ಹಣದ ಲೆಕ್ಕವೂ ಸಾರ್ವಜನಿಕವಾಗಿ ಲಭ್ಯವಿಲ್ಲ ಎಂದು ಅವರು ಆರೋಪಿಸಿದರು.

“ಪೇಜಾವರ ಶ್ರೀಗಳೂ ರಾಮ ಮಂದಿರದ ದೇಣಿಗೆ ಲೆಕ್ಕ ಕೇಳಿದ್ದಾರೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಶ್ರೀಗಳ ಈ ಪ್ರಶ್ನೆಗೆ ಏನು ಉತ್ತರ ನೀಡುತ್ತಾರೆ? ಅವರು ಶ್ರೀಗಳ ಅಭಿಪ್ರಾಯವನ್ನು ಒಪ್ಪುತ್ತಾರೆಯೇ ಅಥವಾ ವಿರೋಧಿಸುತ್ತಾರೆಯೇ?” ಎಂದು ಪ್ರಶ್ನಿಸಿದರು.

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಹೇಳಿಕೆಗೆ ತಿರುಗೇಟು ನೀಡಿದ ಹರಿಪ್ರಸಾದ್, ಅವರು ಕೇಂದ್ರ ಸಚಿವರು. ಅವರ ಮಾತುಗಳನ್ನು ನಾನು ಏಕೆ ಕೇಳಬೇಕು? ಈ ಹಿಂದೆ ಬಿ.ಎಸ್. ಯಡಿಯೂರಪ್ಪ ಅವರು ಪಕ್ಷ ತೊರೆದಾಗ ಅವರ ವಿರುದ್ಧವೇ ಮಾತನಾಡಿದ್ದರು. ಈಗ ಅವರನ್ನೇ ಹೊಗಳುತ್ತಿದ್ದಾರೆ ಎಂದು ಟೀಕಿಸಿದರು.

ರಾಮ ಮಂದಿರ ಟ್ರಸ್ಟ್ ದೇಣಿಗೆಯ ಲೆಕ್ಕ ನೀಡುತ್ತಿಲ್ಲ ಎಂಬ ಆರೋಪಗಳು ಕೇಳಿಬರುತ್ತಿವೆ. ರಾಮನ ಹೆಸರಿನಲ್ಲಿಯೂ ಕಳ್ಳತನ ಮತ್ತು ಲೂಟಿ ನಡೆದಿದೆ ಎಂಬ ಗಂಭೀರ ಆರೋಪಗಳು ಕೇಳಿಬಂದಿವೆ. ಈ ಕುರಿತು ಸಂಪೂರ್ಣ ಸ್ಪಷ್ಟನೆ ನೀಡಬೇಕು ಎಂದು ಬಿ.ಕೆ. ಹರಿಪ್ರಸಾದ್ ಒತ್ತಾಯಿಸಿದರು.

ಸಿಬ್ಬಂದಿ ಮಾತ್ರ ಇಷ್ಟೊಂದು ದೊಡ್ಡ ಹಗರಣ ನಡೆಸಲು ಸಾಧ್ಯವೇ? ರಾಮ ಮಂದಿರ ದೇಣಿಗೆ ಪ್ರಕರಣದಲ್ಲಿ ಪ್ರಿಯಾಂಕಾ ಗಾಂಧಿ ಪ್ರಶ್ನೆ

ನವದೆಹಲಿ: ಅಯೋಧ್ಯೆಯ ರಾಮ ಮಂದಿರದಲ್ಲಿ ಭಕ್ತರು ನೀಡಿದ ದೇಣಿಗೆ ಹಾಗೂ ಕಾಣಿಕೆ ಹಣದ ದುರ್ಬಳಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ತೀವ್ರ ಪ್ರತಿಕ್ರಿಯೆ ನೀಡಿದ್ದಾರೆ. ಪ್ರಕರಣವನ್ನು ತನಿಖೆಯ ಹೆಸರಿನಲ್ಲಿ ಮುಚ್ಚಿಹಾಕುವ ಪ್ರಯತ್ನ ಮಾಡದೆ, ಪಾರದರ್ಶಕ ತನಿಖೆ ನಡೆಸಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಈ ಕುರಿತು ಎಕ್ಸ್ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಪ್ರಿಯಾಂಕಾ ಗಾಂಧಿ, ಇದು ಕೇವಲ ಹಣದ ಕಳ್ಳತನವಲ್ಲ, ಶ್ರೀರಾಮ ಹಾಗೂ ಅವರ ಮೇಲೆ ಅಪಾರ ಭಕ್ತಿ ಹೊಂದಿರುವ ಲಕ್ಷಾಂತರ ಭಕ್ತರ ನಂಬಿಕೆಗೆ ಮಾಡಿದ ದ್ರೋಹವಾಗಿದೆ ಎಂದು ಹೇಳಿದ್ದಾರೆ.

“ಸದಾಚಾರ, ಸತ್ಯ ಮತ್ತು ಧರ್ಮದ ಪ್ರತೀಕವಾಗಿರುವ ಶ್ರೀರಾಮನ ವಿರುದ್ಧ ಹಾಗೂ ಅವರ ಭಕ್ತರ ವಿಶ್ವಾಸದ ವಿರುದ್ಧ ಈ ಕೃತ್ಯ ಎಸಗಲಾಗಿದೆ. ಈ ಪ್ರಕರಣ ದೇಶದಾದ್ಯಂತ ಜನರನ್ನು ಆಘಾತಕ್ಕೀಡು ಮಾಡಿದೆ” ಎಂದು ಬರೆದಿದ್ದಾರೆ.

ಲಕ್ಷಾಂತರ ಭಕ್ತರು ತಮ್ಮ ಭಕ್ತಿಭಾವದಿಂದ ದೇವಸ್ಥಾನಕ್ಕೆ ಕಾಣಿಕೆ ಹಾಗೂ ದೇಣಿಗೆ ನೀಡುತ್ತಾರೆ. ಆ ನಂಬಿಕೆಯನ್ನು ದುರುಪಯೋಗಪಡಿಸಿಕೊಂಡು ಕಳ್ಳತನ ನಡೆಸಿರುವುದು ಗಂಭೀರ ಅಪರಾಧ ಮಾತ್ರವಲ್ಲ, ಧಾರ್ಮಿಕ ನಂಬಿಕೆಗೆ ಮಾಡಿದ ದ್ರೋಹವೂ ಆಗಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಪ್ರಕರಣದಲ್ಲಿ ಮತ್ತೊಂದು ಪ್ರಮುಖ ಪ್ರಶ್ನೆಯನ್ನು ಎತ್ತಿರುವ ಪ್ರಿಯಾಂಕಾ ಗಾಂಧಿ, “ಕೆಳಮಟ್ಟದ ಸಿಬ್ಬಂದಿ ಮಾತ್ರ ಸಿಸಿಟಿವಿ ಕ್ಯಾಮೆರಾಗಳನ್ನು ಸ್ಥಗಿತಗೊಳಿಸಿ ಕೋಟ್ಯಂತರ ರೂಪಾಯಿ ಮೌಲ್ಯದ ದೇಣಿಗೆಯನ್ನು ದುರ್ಬಳಕೆ ಮಾಡಲು ಸಾಧ್ಯವೇ? ಅಥವಾ ಇದರ ಹಿಂದೆ ಪ್ರಭಾವಿ ವ್ಯಕ್ತಿಗಳನ್ನೂ ಒಳಗೊಂಡ ದೊಡ್ಡ ಪಿತೂರಿ ಇದೆಯೇ?” ಎಂದು ಪ್ರಶ್ನಿಸಿದ್ದಾರೆ.

ಪ್ರಕರಣವನ್ನು ತನಿಖೆಯ ಹೆಸರಿನಲ್ಲಿ ಮರೆಮಾಚುವ ಬದಲು, ಸಂಪೂರ್ಣ ಪಾರದರ್ಶಕ ಹಾಗೂ ನಿಷ್ಪಕ್ಷಪಾತ ತನಿಖೆ ನಡೆಸಬೇಕು. ಈ ಕಳ್ಳತನದಲ್ಲಿ ಭಾಗಿಯಾಗಿರುವ ಪ್ರತಿಯೊಬ್ಬರನ್ನೂ ಕಾನೂನಿನ ಮುಂದೆ ತಂದು ಕಠಿಣ ಶಿಕ್ಷೆಗೆ ಗುರಿಪಡಿಸಬೇಕು ಎಂದು ಕಾಂಗ್ರೆಸ್ ನಾಯಕಿ ಒತ್ತಾಯಿಸಿದ್ದಾರೆ.

ಸಮ್ಮತಿಯ ಲೈಂಗಿಕ ಸಂಬಂಧ ಪ್ರಕರಣದಲ್ಲಿ 19 ವರ್ಷದ ಯುವಕನ ಬಂಧನಕ್ಕೆ ಹೈಕೋರ್ಟ್ ಅಸಮಾಧಾನ; ಬಿಡುಗಡೆಗೆ ಆದೇಶ

ಬೆಂಗಳೂರು: ಇಬ್ಬರು ವಯಸ್ಕರ ನಡುವಿನ ಪರಸ್ಪರ ಸಮ್ಮತಿಯ ಪ್ರೀತಿಯ ಸಂಬಂಧವನ್ನು ಸಮಾಜ ಅಥವಾ ಕುಟುಂಬ ಒಪ್ಪುವುದಿಲ್ಲ ಎಂಬ ಕಾರಣಕ್ಕೆ ಅದನ್ನು ಅಪರಾಧವೆಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ.

ಸಮ್ಮತಿಯ ಪ್ರೀತಿಯ ಸಂಬಂಧವನ್ನು ಅಪರಾಧೀಕರಣಗೊಳಿಸಲು ಕ್ರಿಮಿನಲ್ ಕಾನೂನನ್ನು ದುರುಪಯೋಗಪಡಿಸಿಕೊಳ್ಳಲು ಅವಕಾಶವಿಲ್ಲ ಎಂದು ಸ್ಪಷ್ಟಪಡಿಸಿರುವ ನ್ಯಾಯಾಲಯ, ಮದುವೆ ಯಾಗುವುದಾಗಿ ಭರವಸೆ ನೀಡಿ ಲೈಂಗಿಕ ಸಂಪರ್ಕ ಬೆಳೆಸಿದ ಆರೋಪದಲ್ಲಿ ಜೈಲು ಸೇರಿದ್ದ 19 ವರ್ಷದ ಯುವಕನನ್ನು ತಕ್ಷಣ ಬಿಡುಗಡೆ ಮಾಡುವಂತೆ ಆದೇಶಿಸಿದೆ.

ಬೆಂಗಳೂರು ನಿವಾಸಿ ಎಂ. ಧನುಷ್ ಮತ್ತು ಇತರರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಈ ಆದೇಶ ನೀಡಿದೆ. ಜೊತೆಗೆ, ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣಾ ನ್ಯಾಯಾಲಯದಲ್ಲಿ ನಡೆಯುತ್ತಿರುವ ಮುಂದಿನ ಎಲ್ಲ ನ್ಯಾಯಿಕ ಪ್ರಕ್ರಿಯೆಗಳಿಗೆ ತಡೆ ನೀಡಿದೆ.

ವಿಚಾರಣೆ ವೇಳೆ ದೂರುದಾರಳಾದ ಯುವತಿ ಸ್ವತಃ ನ್ಯಾಯಾಲಯದ ಮುಂದೆ ಹಾಜರಾಗಿ, ತಮ್ಮಿಬ್ಬರ ನಡುವಿನ ಸಂಬಂಧ ಸಂಪೂರ್ಣ ಸಮ್ಮತಿಯದ್ದಾಗಿತ್ತು. ತಾವು ಪರಸ್ಪರ ಪ್ರೀತಿಸುತ್ತಿದ್ದು, ಮದುವೆಯಾಗಲು ಸಹ ಸಿದ್ಧರಾಗಿದ್ದೇವೆ ಎಂದು ನ್ಯಾಯಾಲಯಕ್ಕೆ ತಿಳಿಸಿದರು. ಈ ಹೇಳಿಕೆಯನ್ನು ದಾಖಲಿಸಿಕೊಂಡ ನ್ಯಾಯಪೀಠ ಮಹತ್ವದ ಆದೇಶ ಹೊರಡಿಸಿದೆ.

ಕ್ರಿಮಿನಲ್ ಕಾನೂನು ಅತ್ಯಂತ ಗಂಭೀರವಾದ ಸಾಧನವಾಗಿದ್ದು, ಕುಟುಂಬದ ಒಪ್ಪಿಗೆ ಇಲ್ಲ ಅಥವಾ ಸಮಾಜಕ್ಕೆ ಮುಜುಗರವಾಗುತ್ತದೆ ಎಂಬ ಕಾರಣಕ್ಕೆ ಇಬ್ಬರು ವಯಸ್ಕರ ನಡುವಿನ ಸಮ್ಮತಿಯ ಸಂಬಂಧವನ್ನು ಅಪರಾಧವೆಂದು ಪರಿಗಣಿಸಲು ಅದನ್ನು ಬಳಸಲು ಅವಕಾಶ ನೀಡಲಾಗುವುದಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

ಪ್ರಕರಣದ ದಾಖಲೆಗಳನ್ನು ಪರಿಶೀಲಿಸಿದಾಗ ಯುವಕನಿಂದ ಯಾವುದೇ ಬಲವಂತ, ಬೆದರಿಕೆ ಅಥವಾ ಲೈಂಗಿಕ ದೌರ್ಜನ್ಯ ನಡೆದಿರುವುದಕ್ಕೆ ಪ್ರಾಥಮಿಕವಾಗಿ ಯಾವುದೇ ಪುರಾವೆಗಳು ಕಂಡುಬಂದಿಲ್ಲ. ಇದು ಇಬ್ಬರು ವಯಸ್ಕರ ನಡುವಿನ ಪರಸ್ಪರ ಸಮ್ಮತಿಯ ಸಂಬಂಧವಾಗಿದೆ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.

ಕೇವಲ 19 ವರ್ಷದ ಯುವಕನನ್ನು ಜೈಲಿನಲ್ಲೇ ಮುಂದುವರಿಸುವುದು ಆತನ ಭವಿಷ್ಯದ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯಿದೆ. ಹೊರ ಜಗತ್ತಿಗಿಂತ ಜೈಲಿನ ವಾತಾವರಣವೇ ಆತನಿಗೆ ಹೆಚ್ಚಿನ ಅಪಾಯ ಉಂಟುಮಾಡಬಹುದು ಎಂದು ನ್ಯಾಯಾಲಯ ಹೇಳಿದೆ.

ಈ ಹಿನ್ನೆಲೆಯಲ್ಲಿ ವಿಚಾರಣಾ ನ್ಯಾಯಾಲಯದ ಮುಂದಿನ ಎಲ್ಲ ಪ್ರಕ್ರಿಯೆಗಳಿಗೆ ತಡೆ ನೀಡಿರುವ ಹೈಕೋರ್ಟ್, ಜೈಲು ಅಧಿಕಾರಿಗಳಿಗೆ ಇ-ಮೇಲ್ ಮೂಲಕ ತಕ್ಷಣ ಆದೇಶದ ಪ್ರತಿಯನ್ನು ರವಾನಿಸಿ, ಯುವಕನನ್ನು ಕೂಡಲೇ ಬಿಡುಗಡೆ ಮಾಡುವಂತೆ ಸೂಚಿಸಿದೆ.

ಪ್ರಕರಣದ ಹಿನ್ನೆಲೆ

19 ವರ್ಷದ ಧನುಷ್ ಹಾಗೂ ಅದೇ ವಯಸ್ಸಿನ ಯುವತಿ ಪರಸ್ಪರ ಪ್ರೀತಿಸುತ್ತಿದ್ದರು. ಬಳಿಕ ಯುವತಿಯ ದೂರಿನ ಆಧಾರದ ಮೇಲೆ ಬೆಂಗಳೂರಿನ ಪೊಲೀಸ್ ಠಾಣೆಯೊಂದರಲ್ಲಿ ಧನುಷ್ ಹಾಗೂ ಅವರ ಕುಟುಂಬದ ಸದಸ್ಯರ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್) ಸೆಕ್ಷನ್ 64 (ಅತ್ಯಾಚಾರ) ಮತ್ತು ಸೆಕ್ಷನ್ 69 (ಮದುವೆಯಾಗುವ ಸುಳ್ಳು ಭರವಸೆ ನೀಡಿ ಲೈಂಗಿಕ ಸಂಬಂಧ ಬೆಳೆಸುವುದು) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಈ ಪ್ರಕರಣವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ಯುವಕನ ಬಿಡುಗಡೆಗೆ ಆದೇಶ ನೀಡಿ ಮುಂದಿನ ವಿಚಾರಣೆಗೆ ತಡೆ ನೀಡಿದೆ.

ಶಾಲೆಯಲ್ಲಿ ಏಕಾಏಕಿ ಕುಸಿದು ಬಿದ್ದ ಅತಿಥಿ ಶಿಕ್ಷಕ: ಹೃದಯಾಘಾತದಿಂದ 29 ವರ್ಷದ ಯುವಕ ಸಾವು

0

ರಾಯಚೂರು: ಮಸ್ಕಿ ತಾಲೂಕಿನ ಮೆದಿಕಿನಾಳ ಸರ್ಕಾರಿ ಪ್ರೌಢಶಾಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಅತಿಥಿ ಶಿಕ್ಷಕರೊಬ್ಬರು ವಿದ್ಯಾರ್ಥಿಗಳೊಂದಿಗೆ ಆಟವಾಡುತ್ತಿದ್ದ ವೇಳೆ ಏಕಾಏಕಿ ಕುಸಿದು ಬಿದ್ದು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ನಾಗರಬೆಂಚಿ ಗ್ರಾಮದ 29 ವರ್ಷದ ವೀರನಗೌಡ ಪಾಟೀಲ್ ಮೃತ ಶಿಕ್ಷಕರಾಗಿದ್ದಾರೆ. ಮಧ್ಯಾಹ್ನ ಊಟದ ನಂತರ ಶಾಲಾ ಆವರಣದಲ್ಲಿ ಮಕ್ಕಳೊಂದಿಗೆ ಆಟವಾಡುತ್ತಿದ್ದ ವೇಳೆ ಅವರಿಗೆ ತೀವ್ರ ಎದೆನೋವು ಕಾಣಿಸಿಕೊಂಡು ನೆಲಕ್ಕುರುಳಿದ್ದಾರೆ.

ಸಹ ಶಿಕ್ಷಕರು ಹಾಗೂ ಸ್ಥಳೀಯರು ತಕ್ಷಣ ಅವರನ್ನು ಮಸ್ಕಿಯ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲು ಮುಂದಾದರೂ, ಆಸ್ಪತ್ರೆಗೆ ತಲುಪುವ ಮುನ್ನವೇ ಅವರು ಮಾರ್ಗಮಧ್ಯೆ ಕೊನೆಯುಸಿರೆಳೆದಿದ್ದಾರೆ.

ಯುವ ವಯಸ್ಸಿನಲ್ಲೇ ಶಿಕ್ಷಕರ ಅಕಾಲಿಕ ನಿಧನ ಶಾಲೆಯ ವಿದ್ಯಾರ್ಥಿಗಳು, ಸಹೋದ್ಯೋಗಿಗಳು ಹಾಗೂ ಗ್ರಾಮಸ್ಥರಲ್ಲಿ ತೀವ್ರ ದುಃಖ ಮತ್ತು ಆತಂಕ ಮೂಡಿಸಿದೆ.

ಜಿಲ್ಲಾ ನ್ಯಾಯಾಲಯಗಳ ಮೇಲೆ ಮತ್ತೆ ಬಾಂಬ್ ಭೀತಿ! ಹಾವೇರಿ, ಧಾರವಾಡ, ಕೊಡಗಿನಲ್ಲಿ ಹೈ ಅಲರ್ಟ್ – ಶಾಲೆಯೂ ಖಾಲಿ

0

ಹಾವೇರಿ: ಹಾವೇರಿ, ಧಾರವಾಡ ಹಾಗೂ ಕೊಡಗು ಜಿಲ್ಲಾ ನ್ಯಾಯಾಲಯಗಳಿಗೆ ಬಾಂಬ್ ಬೆದರಿಕೆ ಇ-ಮೇಲ್ ಬಂದ ಹಿನ್ನೆಲೆಯಲ್ಲಿ ಮೂರು ಜಿಲ್ಲೆಗಳಲ್ಲೂ ಹೈ ಅಲರ್ಟ್ ಘೋಷಿಸಲಾಗಿದೆ. ನ್ಯಾಯಾಲಯಗಳ ಜೊತೆಗೆ ಮಡಿಕೇರಿಯ ಕೇಂದ್ರೀಯ ವಿದ್ಯಾಲಯಕ್ಕೂ ಬೆದರಿಕೆ ಸಂದೇಶ ಬಂದಿರುವುದರಿಂದ ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು ಬಿಗಿಗೊಳಿಸಲಾಗಿದೆ.

ಹಾವೇರಿ ಜಿಲ್ಲಾ ನ್ಯಾಯಾಲಯಕ್ಕೆ ಎರಡನೇ ಬಾರಿ ಬೆದರಿಕೆ ಸಂದೇಶ ಬಂದ ತಕ್ಷಣ ಕಲಾಪಗಳನ್ನು ಸ್ಥಗಿತಗೊಳಿಸಿ, ನ್ಯಾಯಾಧೀಶರು, ವಕೀಲರು, ಸಿಬ್ಬಂದಿ ಹಾಗೂ ಕಕ್ಷಿದಾರರನ್ನು ಹೊರಗೆ ಸ್ಥಳಾಂತರಿಸಲಾಯಿತು. ಕೋರ್ಟ್ ಆವರಣ, ಕಟ್ಟಡ ಹಾಗೂ ಪಾರ್ಕಿಂಗ್ ಪ್ರದೇಶದಲ್ಲಿ ಬಾಂಬ್ ನಿಷ್ಕ್ರಿಯ ದಳ ಮತ್ತು ಶ್ವಾನದಳದಿಂದ ಸಂಪೂರ್ಣ ತಪಾಸಣೆ ನಡೆಸಲಾಗುತ್ತಿದೆ. ದುಷ್ಕರ್ಮಿಗಳು ಮಧ್ಯಾಹ್ನ 2.15ಕ್ಕೆ ಸ್ಫೋಟಿಸುವುದಾಗಿ ಎಚ್ಚರಿಕೆ ನೀಡಿರುವ ಹಿನ್ನೆಲೆಯಲ್ಲಿ ನ್ಯಾಯಾಲಯದ ಪ್ರವೇಶ ನಿರ್ಬಂಧಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಇ-ಮೇಲ್ ಕಳುಹಿಸಿದವರ ಪತ್ತೆಗೆ ಕಾರ್ಯಾಚರಣೆ ಆರಂಭಿಸಿದ್ದಾರೆ. ಶನಿವಾರದ ನ್ಯಾಯಾಂಗ ಕಲಾಪಗಳನ್ನು ಸೋಮವಾರಕ್ಕೆ ಮುಂದೂಡಲಾಗಿದೆ.

ಮಡಿಕೇರಿಯ ಕೇಂದ್ರೀಯ ವಿದ್ಯಾಲಯ ಮತ್ತು ಜಿಲ್ಲಾ ನ್ಯಾಯಾಲಯಕ್ಕೂ ಇದೇ ರೀತಿಯ ಬೆದರಿಕೆ ಇ-ಮೇಲ್ ಬಂದಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಶಾಲೆಯ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಮನೆಗೆ ಕಳುಹಿಸಲಾಯಿತು. ಬಾಂಬ್ ನಿಷ್ಕ್ರಿಯ ದಳ ಹಾಗೂ ಶ್ವಾನದಳದಿಂದ ಶಾಲಾ ಆವರಣದ ಸಂಪೂರ್ಣ ಶೋಧ ನಡೆಸಲಾಗಿದೆ. ಈ ಬೆಳವಣಿಗೆ ವಿದ್ಯಾರ್ಥಿಗಳು, ಪೋಷಕರು ಹಾಗೂ ಸಿಬ್ಬಂದಿಯಲ್ಲಿ ಆತಂಕ ಸೃಷ್ಟಿಸಿತು.

ಧಾರವಾಡ ಜಿಲ್ಲಾ ನ್ಯಾಯಾಲಯಕ್ಕೆ ಕಳೆದ ಎಂಟು ದಿನಗಳಲ್ಲಿ ಮೂರನೇ ಬಾರಿ ಬಾಂಬ್ ಬೆದರಿಕೆ ಬಂದಿದೆ. ಈ ಬಾರಿ ‘ಅನ್ನನಾಥಮ್ ಅರಿಯಪ್ಪನ್’ ಹೆಸರಿನಲ್ಲಿ ಕಳುಹಿಸಲಾದ ಇ-ಮೇಲ್‌ನಲ್ಲಿ ಮೂರು ಗಂಟೆಯೊಳಗೆ ಬಾಂಬ್ ಸ್ಫೋಟಿಸುವುದಾಗಿ ಉಲ್ಲೇಖಿಸಲಾಗಿದೆ. ಪ್ರತಿ ಬೆದರಿಕೆ ಸಂದೇಶದ ಬಳಿಕ ಪೊಲೀಸರು, ಶ್ವಾನದಳ ಹಾಗೂ ಬಾಂಬ್ ನಿಷ್ಕ್ರಿಯ ದಳ ಸ್ಥಳ ಪರಿಶೀಲನೆ ನಡೆಸುತ್ತಿದ್ದು, ಇತ್ತೀಚಿನ ಪ್ರಕರಣದಲ್ಲೂ ತನಿಖೆ ಮುಂದುವರಿದಿದೆ.

ಶಿರಾದಲ್ಲಿ ಭೀಕರ ದುರಂತ! ಪ್ರೇಯಸಿಗೆ ಚಾಕು ಇರಿದು ಕಾರಿನಲ್ಲೇ ಪೆಟ್ರೋಲ್ ಬಾಂಬ್ ಸಿಡಿಸಿಕೊಂಡ ಯುವಕ ಸಜೀವ ದಹನ

0

ತುಮಕೂರು: ಶಿರಾ ತಾಲೂಕಿನ ಜೋಗಿಹಳ್ಳಿ ಸಮೀಪ ಪ್ರೇಮಿಗಳ ನಡುವಿನ ವೈಷಮ್ಯ ರಕ್ತರಂಜಿತ ದುರಂತಕ್ಕೆ ಕಾರಣವಾಗಿದ್ದು, ಯುವತಿಗೆ ಚಾಕುವಿನಿಂದ ಇರಿದ ಬಳಿಕ ಕಾರಿನೊಳಗೆ ಪೆಟ್ರೋಲ್ ಬಾಂಬ್ ಸ್ಫೋಟಿಸಿಕೊಂಡು ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಮೃತನನ್ನು ನಾಗೇಂದ್ರ (30) ಎಂದು ಗುರುತಿಸಲಾಗಿದ್ದು, ತುಮಕೂರು–ಪುಣೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿನೊಳಗೆ ಸಂಭವಿಸಿದ ಸ್ಫೋಟದಲ್ಲಿ ಆತ ಸ್ಥಳದಲ್ಲೇ ಸಜೀವ ದಹನಗೊಂಡಿದ್ದಾನೆ. ಘಟನೆಯ ವೇಳೆ ಗಂಭೀರವಾಗಿ ಗಾಯಗೊಂಡ ಯುವತಿಯನ್ನು ತಕ್ಷಣ ತುಮಕೂರು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಇಬ್ಬರೂ ಬೆಂಗಳೂರಿನಿಂದ ಅಂಕೋಲ ಕಡೆಗೆ ತೆರಳುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಘಟನೆ ಕಳ್ಳಂಬೆಳ್ಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ.

ಆರೋಪಿ ನಾಗೇಂದ್ರ ಈ ಕೃತ್ಯವನ್ನು ಪೂರ್ವಯೋಜಿತವಾಗಿ ನಡೆಸಿರುವ ಶಂಕೆ ವ್ಯಕ್ತವಾಗಿದೆ. ಆತ ಮೊದಲೇ ಬಾಡಿಗೆ ಕಾರು ಮಾಡಿಕೊಂಡು ಪೆಟ್ರೋಲ್ ಬಾಂಬ್‌ನ್ನು ಜೊತೆಗೆ ತಂದಿದ್ದ ಎಂದು ತನಿಖೆಯಲ್ಲಿ ಗೊತ್ತಾಗಿದೆ. ಪ್ರೇಮ ಸಂಬಂಧದ ಹಿನ್ನೆಲೆ ಘಟನೆ ನಡೆದಿರುವ ಸಾಧ್ಯತೆಯನ್ನು ಪೊಲೀಸರು ಎಲ್ಲ ಆಯಾಮಗಳಲ್ಲಿ ಪರಿಶೀಲಿಸುತ್ತಿದ್ದಾರೆ.

ತುಮಕೂರು ಎಸ್‌ಪಿ ಅಶೋಕ್ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣದ ಸತ್ಯಾಸತ್ಯತೆ ಬಯಲಿಗೆಳೆಯಲು ತನಿಖೆ ಚುರುಕುಗೊಳಿಸಲಾಗಿದೆ.

ಮುಳ್ಳಯ್ಯನಗಿರಿಯಲ್ಲಿ ಟ್ರಾಫಿಕ್‌ ಅಬ್ಬರ! ಆನ್‌ಲೈನ್ ಟಿಕೆಟ್ ನಿಯಮ ಉಲ್ಲಂಘನೆ ಆರೋಪ – ವಾಹನ ದಟ್ಟಣೆಯಿಂದ ಪ್ರವಾಸಿಗರ ಪರದಾಟ

ಚಿಕ್ಕಮಗಳೂರು: ಸಾಲು-ಸಾಲು ರಜೆ ಪ್ರಯುಕ್ತ ಮುಳ್ಳಯ್ಯನಗಿರಿ, ದತ್ತಪೀಠ ಹಾಗೂ ಗಾಳಿಕೆರೆ ಸೇರಿದಂತೆ ಚಿಕ್ಕಮಗಳೂರಿನ ಪ್ರಮುಖ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ದಂಡೇ ಹರಿದು ಬಂದಿದೆ. ಏಕಾಏಕಿ ಸಾವಿರಾರು ವಾಹನಗಳು ಗಿರಿಭಾಗ ಪ್ರವೇಶಿಸಿದ ಪರಿಣಾಮ ಭಾರೀ ಟ್ರಾಫಿಕ್ ಉಂಟಾಗಿ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.

ಪಂಡರವಳ್ಳಿ–ಸೀತಾಳಯ್ಯನಗಿರಿ ಮಾರ್ಗದ ಕಿರಿದಾದ ರಸ್ತೆಯಲ್ಲಿ ವಾಹನಗಳು ಸಾಲುಗಟ್ಟಿ ನಿಂತಿದ್ದು, ಪ್ರವಾಸಿಗರು ಗಂಟೆಗಟ್ಟಲೇ ಟ್ರಾಫಿಕ್‌ನಲ್ಲಿ ಸಿಲುಕಿ ಹೈರಾಣಾಗಿದ್ದಾರೆ. ಸ್ಥಳದಲ್ಲಿ ವಾಹನಗಳ ಉದ್ದನೆಯ ಸಾಲು ನಿರ್ಮಾಣವಾಗಿದ್ದು, ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಹಾಗೂ ಚೆಕ್‌ಪೋಸ್ಟ್ ಸಿಬ್ಬಂದಿ ಹರಸಾಹಸಪಟ್ಟಿದ್ದಾರೆ.

ಈ ನಡುವೆ ಪ್ರವಾಸೋದ್ಯಮ ಇಲಾಖೆಯ ಆನ್‌ಲೈನ್ ಟಿಕೆಟ್ ನಿಯಮ ಪಾಲನೆಯಾಗುತ್ತಿಲ್ಲ ಎಂಬ ಆರೋಪವೂ ಕೇಳಿಬಂದಿದೆ. ಅಧಿಕೃತ ವ್ಯವಸ್ಥೆಯನ್ನು ಕಡೆಗಣಿಸಿ, ಒಂದೊಂದು ಕಾರಿಗೆ ₹1,000ರಿಂದ ₹1,500 ವರೆಗೆ ಹಣ ಪಡೆದು ಗಿರಿಭಾಗಕ್ಕೆ ಪ್ರವೇಶ ಕಲ್ಪಿಸಲಾಗುತ್ತಿದೆ ಎನ್ನಲಾಗಿದ್ದು, ಇದರಿಂದಲೇ ವಾಹನಗಳ ಸಂಖ್ಯೆ ನಿಯಂತ್ರಣ ತಪ್ಪಿ ಟ್ರಾಫಿಕ್ ಸಮಸ್ಯೆ ಮತ್ತಷ್ಟು ಗಂಭೀರವಾಗಿದೆ ಎಂಬ ಆರೋಪಗಳು ವ್ಯಕ್ತವಾಗಿವೆ.