Home Blog

ಅನಾರೋಗ್ಯ ಹಿನ್ನೆಲೆ: ಮಹಾರಾಷ್ಟ್ರ ಡಿಸಿಎಂ ಏಕನಾಥ್ ಶಿಂಧೆ ಆಸ್ಪತ್ರೆಗೆ ದಾಖಲು

ಮುಂಬೈ: ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರನ್ನು ಅನಾರೋಗ್ಯದ ಹಿನ್ನೆಲೆಯಲ್ಲಿ ಇಂದು ಮುಂಬೈನ ಥಾಣೆಯಲ್ಲಿರುವ ಜುಪಿಟರ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಜ್ವರ ಹಾಗೂ ಮೈಕೈ ನೋವಿನಿಂದ ಬಳಲುತ್ತಿದ್ದ ಹಿನ್ನೆಲೆಯಲ್ಲಿ ವೈದ್ಯರ ಸಲಹೆಯಂತೆ ಮುಂಜಾಗ್ರತಾ ಕ್ರಮವಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಪ್ರಸ್ತುತ ಏಕನಾಥ್ ಶಿಂಧೆ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ವೈದ್ಯರ ವಿಶೇಷ ತಂಡವು ನಿರಂತರವಾಗಿ ಆರೋಗ್ಯದ ಮೇಲ್ವಿಚಾರಣೆ ನಡೆಸುತ್ತಿದೆ. ಆಸ್ಪತ್ರೆಯಲ್ಲಿ ಅಗತ್ಯ ವೈದ್ಯಕೀಯ ಪರೀಕ್ಷೆಗಳು ನಡೆಯುತ್ತಿದ್ದು, ಚಿಕಿತ್ಸೆ ಮುಂದುವರಿದಿದೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ಕಳೆದ ಕೆಲವು ದಿನಗಳಿಂದ ನಿರಂತರ ರಾಜಕೀಯ ಚಟುವಟಿಕೆಗಳು ಹಾಗೂ ಅತಿಯಾದ ಕೆಲಸದ ಒತ್ತಡದಿಂದಾಗಿ ಅವರ ಆರೋಗ್ಯದಲ್ಲಿ ಏರುಪೇರಾಗಿದೆ. ಶುಕ್ರವಾರ ವಿಧಾನಮಂಡಲ ಅಧಿವೇಶನದ ವೇಳೆ ಅವರಿಗೆ ಜ್ವರ ಕಾಣಿಸಿಕೊಂಡಿದ್ದು, ಸುಸ್ತು ಕೂಡ ಉಂಟಾಗಿತ್ತು ಎಂದು ತಿಳಿದುಬಂದಿದೆ.

ಆರೋಗ್ಯದ ಕಾರಣದಿಂದಾಗಿ ಏಕನಾಥ್ ಶಿಂಧೆ ಅವರ ಎಲ್ಲಾ ನಿಗದಿತ ಸಾರ್ವಜನಿಕ ಕಾರ್ಯಕ್ರಮಗಳನ್ನು ತಾತ್ಕಾಲಿಕವಾಗಿ ರದ್ದುಗೊಳಿಸಲಾಗಿದೆ. ಅವರ ಆರೋಗ್ಯದ ಬಗ್ಗೆ ಆತಂಕಪಡುವ ಅಗತ್ಯವಿಲ್ಲ ಎಂದು ಶಿವಸೇನೆ ಮೂಲಗಳು ತಿಳಿಸಿವೆ.

ಮತದಾರರ ಪಟ್ಟಿ ಸಮೀಕ್ಷೆ ವೇಳೆ ಅಪಘಾತ: ಗ್ರಾಮ ಲೆಕ್ಕಾಧಿಕಾರಿ ಐಸಿಯುನಲ್ಲಿ

0

ತುಮಕೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಕರ್ತವ್ಯ ನಿರ್ವಹಣೆಗೆ ತೆರಳುತ್ತಿದ್ದ ಗ್ರಾಮ ಲೆಕ್ಕಾಧಿಕಾರಿಗೆ ಸಂಭವಿಸಿದ ಭೀಕರ ರಸ್ತೆ ಅಪಘಾತ ಆಡಳಿತ ವ್ಯವಸ್ಥೆಯ ಮೇಲೆಯೇ ಪ್ರಶ್ನೆ ಎಬ್ಬಿಸಿದೆ. ಗೂಳೂರು ಹೋಬಳಿಯ ಗ್ರಾಮ ಲೆಕ್ಕಾಧಿಕಾರಿ ಭಾವನಾ (26) ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದು, ಸಿದ್ದಗಂಗಾ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಎಸ್‌ಐಆರ್ ಸಮೀಕ್ಷೆಗಾಗಿ ಮನೆ ಮನೆಗೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಅಪಘಾತದ ಬಳಿಕ ಪ್ರಕರಣ ದಾಖಲಿಸಿಕೊಂಡಿರುವ ತುಮಕೂರು ಗ್ರಾಮಾಂತರ ಪೊಲೀಸರು ತನಿಖೆ ಆರಂಭಿಸಿದ್ದು, ಡಿಕ್ಕಿ ಹೊಡೆದು ಪರಾರಿಯಾದ ವಾಹನದ ಪತ್ತೆಗೆ ಕ್ರಮ ಕೈಗೊಂಡಿದ್ದಾರೆ.

ಘಟನೆಯ ಬೆನ್ನಲ್ಲೇ ಸಿದ್ದಗಂಗಾ ಆಸ್ಪತ್ರೆ ಬಳಿ ಜಮಾಯಿಸಿದ ಗ್ರಾಮ ಲೆಕ್ಕಾಧಿಕಾರಿಗಳು, ಎಸ್‌ಐಆರ್ ಕಾರ್ಯವನ್ನು ನಿಗದಿತ ಅವಧಿಯಲ್ಲಿ ಮುಗಿಸುವಂತೆ ಅಧಿಕಾರಿಗಳು ನಿರಂತರ ಒತ್ತಡ ಹೇರುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿ ಪ್ರತಿಭಟನೆ ನಡೆಸಿದರು.

ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ ಶುಭಾ ಕಲ್ಯಾಣ್ ಎದುರೇ ಭಾವನಾ ಪೋಷಕರು ಕಿಡಿಕಾರಿದರು. “ರಾತ್ರಿ 10 ಗಂಟೆಯವರೆಗೆ ಸಭೆ, ಬೆಳಗ್ಗೆ 6 ಗಂಟೆಗೆ ಮತ್ತೆ ಕರ್ತವ್ಯ… ರ‍್ಯಾಂಕಿಂಗ್ ಮತ್ತು ಪ್ರೊಮೋಷನ್‌ಗಾಗಿ ಅಧಿಕಾರಿಗಳು ಸಿಬ್ಬಂದಿಯ ಜೀವದ ಜೊತೆ ಆಟವಾಡುತ್ತಿದ್ದಾರೆ” ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಈ ಘಟನೆ ಎಸ್‌ಐಆರ್ ಕರ್ತವ್ಯ ನಿರ್ವಹಣೆಯ ಒತ್ತಡದ ಕುರಿತು ಹೊಸ ಚರ್ಚೆಗೆ ಕಾರಣವಾಗಿದೆ

ಆತ್ಮಹತ್ಯೆಗೆ ನದಿಗೆ ಹಾರಿ ಮರಳಿನ ಮೇಲೆ ಬಿದ್ದ ವ್ಯಕ್ತಿಯನ್ನು ರಕ್ಷಿಸಿದ ಅಗ್ನಿಶಾಮಕದಳ-ಪೊಲೀಸರು

0

ಹಾಸನ: ಹಾಸನ ಜಿಲ್ಲೆಯ ಸಕಲೇಶಪುರ ಪಟ್ಟಣದ ಮಳಲಿ ಬೈಪಾಸ್‌ನಲ್ಲಿರುವ ಹೇಮಾವತಿ ಸೇತುವೆಯಿಂದ ನದಿಗೆ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯನ್ನು ಅಗ್ನಿಶಾಮಕದಳ ಹಾಗೂ ಪೊಲೀಸರು ಜೀವಂತವಾಗಿ ರಕ್ಷಿಸಿರುವ ಘಟನೆ ನಡೆದಿದೆ.

ಹಾಸನ ಮೂಲದ ಚಿರಂತ್ (38) ರಾಷ್ಟ್ರೀಯ ಹೆದ್ದಾರಿ-75ರ ಬಿಎಂ ರಸ್ತೆಯಲ್ಲಿರುವ ಹೇಮಾವತಿ ಸೇತುವೆಯಿಂದ ನದಿಗೆ ಹಾರಿದ್ದಾರೆ. ಇದನ್ನು ಕಂಡ ಸ್ಥಳೀಯರು ಕೂಡಲೇ ಸಕಲೇಶಪುರ ನಗರ ಪೊಲೀಸರಿಗೆ ಹಾಗೂ ಅಗ್ನಿಶಾಮಕದಳದ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ.

ತಕ್ಷಣ ಸ್ಥಳಕ್ಕಾಗಮಿಸಿದ ರಕ್ಷಣಾ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ ವೇಳೆ, ನದಿಯಲ್ಲಿ ನೀರಿನ ಮಟ್ಟ ಕಡಿಮೆಯಿದ್ದ ಕಾರಣ ಚಿರಂತ್ ಮರಳಿನ ಮೇಲೆ ಬಿದ್ದಿರುವುದು ಪತ್ತೆಯಾಗಿದೆ. ಕೂಡಲೇ ಅವರನ್ನು ಮೇಲಕ್ಕೆ ಎತ್ತಿ ಸುರಕ್ಷಿತವಾಗಿ ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಚಿರಂತ್ ಆತ್ಮಹತ್ಯೆಗೆ ಯತ್ನಿಸಿರುವ ನಿಖರ ಕಾರಣ ಇನ್ನೂ ಬಹಿರಂಗವಾಗಿಲ್ಲ. ಪ್ರಕರಣ ಸಕಲೇಶಪುರ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದಾಖಲಾಗಿದ್ದು, ಪೊಲೀಸರು ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ.

ಅಕ್ರಮ ಬಡ್ಡಿ ವ್ಯವಹಾರ: ರೌಡಿ ಶೀಟರ್ ದರ್ಶನ್‌ಗೆ 6 ತಿಂಗಳ ಗಡಿಪಾರು- ಎಸ್ಪಿ ರೋಹನ್ ಜಗದೀಶ್ ಆದೇಶ

ಗದಗ: ಅಕ್ರಮ ಬಡ್ಡಿ ವ್ಯವಹಾರ ನಡೆಸಿ ಸಾರ್ವಜನಿಕರಿಗೆ ಬೆದರಿಕೆ, ಕಿರುಕುಳ ಹಾಗೂ ಹಲ್ಲೆ ನಡೆಸುತ್ತಿದ್ದ ಆರೋಪದ ಹಿನ್ನೆಲೆಯಲ್ಲಿ ರೌಡಿ ಶೀಟರ್ ದರ್ಶನ್‌ನನ್ನು 6 ತಿಂಗಳ ಅವಧಿಗೆ ಗದಗ ಜಿಲ್ಲೆಯಿಂದ ಗಡಿಪಾರು ಮಾಡಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್ ಆದೇಶ ಹೊರಡಿಸಿದ್ದಾರೆ. ಬೆಟಗೇರಿ ಪೊಲೀಸ್ ಠಾಣೆಯ ಪ್ರಸ್ತಾವನೆ ಮೇರೆಗೆ ಪ್ರಕರಣದ ಸಂಪೂರ್ಣ ವಿಚಾರಣೆ ನಡೆಸಿದ ಎಸ್‌ಪಿ ಈ ಆದೇಶ ಹೊರಡಿಸಿದ್ದು, ಸಾರ್ವಜನಿಕರ ಶಾಂತಿ, ಸುವ್ಯವಸ್ಥೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ.

ಪೊಲೀಸರ ಮಾಹಿತಿ ಪ್ರಕಾರ, ದರ್ಶನ್ ಅಕ್ರಮ ಬಡ್ಡಿ ವ್ಯವಹಾರ ನಡೆಸಿ ಸಾಲ ಪಡೆದವರಿಂದ ಹೆಚ್ಚಿನ ಬಡ್ಡಿ ವಸೂಲಿ ಮಾಡುತ್ತಿದ್ದ. ಸಾಲ ಮರುಪಾವತಿಯಲ್ಲಿ ವಿಳಂಬವಾದರೆ ಅವರ ಮನೆಗಳಿಗೆ ಅಕ್ರಮ ಪ್ರವೇಶ ಮಾಡಿ ಬೆದರಿಕೆ ಹಾಕುವುದು, ಹಲ್ಲೆ ನಡೆಸುವುದು, ಆಸ್ತಿ-ಪಾಸ್ತಿಗೆ ಹಾನಿ ಉಂಟುಮಾಡುವುದು ಸೇರಿದಂತೆ ಸಾರ್ವಜನಿಕರಲ್ಲಿ ಭಯದ ವಾತಾವರಣ ಸೃಷ್ಟಿಸುತ್ತಿದ್ದ ಎನ್ನಲಾಗಿದೆ. ಈತನ ವಿರುದ್ಧ ಈಗಾಗಲೇ ಹಲವು ಕ್ರಿಮಿನಲ್ ಪ್ರಕರಣಗಳು ದಾಖಲಾಗಿದ್ದರೂ ವರ್ತನೆಯಲ್ಲಿ ಯಾವುದೇ ಬದಲಾವಣೆ ಕಂಡುಬರದ ಕಾರಣ ಗಡಿಪಾರು ಕ್ರಮ ಕೈಗೊಳ್ಳಲಾಗಿದೆ.

ದರ್ಶನ್ ವಿರುದ್ಧ ದಾಖಲಾಗಿರುವ ಪ್ರಕರಣಗಳು

ಬೆಟಗೇರಿ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 73/2020 – ಐಪಿಸಿ ಕಲಂ 363, 384, 324, 342, 504, 506

ಅಪರಾಧ ಸಂಖ್ಯೆ 41/2022 – ಐಪಿಸಿ ಕಲಂ 420, 467, 471 ಹಾಗೂ ಕರ್ನಾಟಕ ಅತಿಯಾದ ಬಡ್ಡಿ ವಸೂಲಿ ನಿಷೇಧ ಕಾಯ್ದೆ-2004ರ ಕಲಂ 3 ಮತ್ತು 4

ಅಪರಾಧ ಸಂಖ್ಯೆ 14/2026 – ಬಿಎನ್‌ಎಸ್ ಕಲಂ 115(2), 318(4), 329(3), 352, 351(3) ಹಾಗೂ 3(5)

ಬೆಟಗೇರಿ ಬಡಾವಣೆ ಪೊಲೀಸ್ ಠಾಣೆ

ಅಪರಾಧ ಸಂಖ್ಯೆ 11/2024 – ಐಪಿಸಿ ಕಲಂ 427, 504, 506 ಜೊತೆಗೆ 34

ಗದಗ ನಗರ ಪೊಲೀಸ್ ಠಾಣೆ

ಅಪರಾಧ ಸಂಖ್ಯೆ 94/2026 – ಬಿಎನ್‌ಎಸ್ ಕಲಂ 308(4), 331(5), 324(5) ಜೊತೆಗೆ 3(5)

ಇದಲ್ಲದೆ, ಬೆಟಗೇರಿ ಪೊಲೀಸ್ ಠಾಣೆಯಲ್ಲಿ ಮುಂಜಾಗ್ರತಾ ಕ್ರಮವಾಗಿ 2021, 2023 ಹಾಗೂ 2025ರಲ್ಲಿ ಸಿಆರ್‌ಪಿಸಿ ಕಲಂ 107 ಹಾಗೂ ಬಿಎನ್‌ಎಸ್‌ಎಸ್ ಕಲಂ 126 ಅಡಿ ಒಟ್ಟು ಐದು ಪ್ರಕರಣಗಳು ದಾಖಲಾಗಿವೆ.

ಜಿಲ್ಲೆಯಲ್ಲಿ ಅಕ್ರಮ ಬಡ್ಡಿ ವ್ಯವಹಾರ ನಡೆಸಿ ಸಾರ್ವಜನಿಕರಿಗೆ ಕಿರುಕುಳ ನೀಡುವವರು ಹಾಗೂ ಸಮಾಜ ವಿರೋಧಿ ಚಟುವಟಿಕೆಗಳಲ್ಲಿ ತೊಡಗುವವರ ವಿರುದ್ಧ ಮುಂದೆಯೂ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಗದಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್ ಎಚ್ಚರಿಕೆ ನೀಡಿದ್ದಾರೆ.

`ಪಡೆದುಕೊಂಡ ಮೇಲೆ ನಡೆದುಕೊಳ್ಳುವ ರೀತಿ ಚೆನ್ನಾಗಿರಲಿ’: ದರ್ಶನ್ ಪತ್ನಿ ಹೇಳಿದ್ದು ಆತನಿಗಾ?

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲಿನಲ್ಲಿರುವ ನಟ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ದರ್ಶನ್ ಹಂಚಿಕೊಂಡಿರುವ ಇನ್‌ಸ್ಟಾಗ್ರಾಂ ಪೋಸ್ಟ್ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಅಪರೂಪವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗುವ ವಿಜಯಲಕ್ಷ್ಮಿ ಅವರ ಈ ಪೋಸ್ಟ್ ಹಲವು ಊಹಾಪೋಹಗಳಿಗೆ ಕಾರಣವಾಗಿದೆ.

ವಿಜಯಲಕ್ಷ್ಮಿ ತಮ್ಮ ಇನ್‌ಸ್ಟಾಗ್ರಾಂ ಸ್ಟೋರಿಯಲ್ಲಿ “ಪಡೆದುಕೊಂಡ ಮೇಲೆ, ನಡೆದುಕೊಳ್ಳುವ ರೀತಿ ಚೆನ್ನಾಗಿರಲಿ… ಅದು ವಸ್ತುವಾಗಲಿ, ವ್ಯಕ್ತಿಯಾಗಲಿ” ಎಂಬ ಸಂದೇಶವನ್ನು ಹಂಚಿಕೊಂಡಿದ್ದಾರೆ. ಯಾವುದೇ ವ್ಯಕ್ತಿಯನ್ನು ಟ್ಯಾಗ್ ಮಾಡದಿದ್ದರೂ, ಈ ಪೋಸ್ಟ್ ಯಾರನ್ನೋ ಉದ್ದೇಶಿಸಿ ಪರೋಕ್ಷ ಸಂದೇಶ ರವಾನಿಸಲಾಗಿದೆ ಎಂಬ ಚರ್ಚೆ ಜೋರಾಗಿದೆ.

ದರ್ಶನ್ ಜೈಲಿನಲ್ಲಿರುವ ಅವಧಿಯಲ್ಲಿ ಕುಟುಂಬದ ಜವಾಬ್ದಾರಿಯನ್ನು ವಿಜಯಲಕ್ಷ್ಮಿಯೇ ನಿರ್ವಹಿಸುತ್ತಿದ್ದಾರೆ. ಇದೇ ವೇಳೆ ದರ್ಶನ್ ಅವರ ಆಪ್ತ ವಲಯದಲ್ಲಿದ್ದ ಕೆಲವರೊಂದಿಗೆ ಅಂತರ ಉಂಟಾಗಿದೆ ಎಂಬ ಮಾತುಗಳೂ ಕೇಳಿಬರುತ್ತಿವೆ.

ಕೆಲವು ವರದಿಗಳ ಪ್ರಕಾರ, ದರ್ಶನ್ ಕುಟುಂಬಕ್ಕೆ ಆಪ್ತರಾಗಿದ್ದ ನಟ ಧನ್ವೀರ್ ಗೌಡ ಅವರೊಂದಿಗೆ ಸಣ್ಣ ಮನಸ್ತಾಪ ಉಂಟಾಗಿದೆ ಎಂಬ ಊಹಾಪೋಹಗಳು ಹರಿದಾಡುತ್ತಿವೆ. ಆದರೆ ಈ ಕುರಿತು ಯಾವುದೇ ಅಧಿಕೃತ ಮಾಹಿತಿ ಅಥವಾ ದೃಢೀಕರಣ ಲಭ್ಯವಾಗಿಲ್ಲ. ವಿಜಯಲಕ್ಷ್ಮಿ ಅವರ ಪೋಸ್ಟ್ ಈ ಬೆಳವಣಿಗೆಗೆ ಸಂಬಂಧಿಸಿದದ್ದೇ ಎಂಬುದು ಸದ್ಯ ಚರ್ಚೆಯ ವಿಷಯವಾಗಿದೆ.

ದೇಹದಲ್ಲಿ ಸ್ಟೀಲ್ ರಾಡ್, ಹಲವು ಸ್ಕ್ರೂಗಳು … ಅಪಘಾತದ ನರಕಯಾತನೆ ಬಿಚ್ಚಿಟ್ಟ ನಭಾ ನಟೇಶ್!

ಸೌತ್ ಸಿನಿರಂಗದ ಸ್ಟಾರ್ ನಟಿ ನಭಾ ನಟೇಶ್ ಎರಡು ವರ್ಷ ಚಿತ್ರರಂಗದಿಂದ ಕಾಣೆಯಾಗಿದ್ದರ ಹಿಂದಿನ ನಿಜವಾದ ಕಾರಣವನ್ನು ಬಹಿರಂಗಪಡಿಸಿದ್ದಾರೆ. ಮೆಟ್ಟಿಲಿನಿಂದ ಬಿದ್ದು ಭುಜದ ಮೂಳೆ ಪುಡಿಪುಡಿಯಾದ ಪರಿಣಾಮ ದೊಡ್ಡ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾಗಿ ನಟಿ ತಿಳಿಸಿದ್ದಾರೆ.

ಅಪಘಾತದ ವೇಳೆ ತಲೆಯನ್ನು ರಕ್ಷಿಸಿಕೊಳ್ಳಲು ಯತ್ನಿಸಿದಾಗ ದೇಹದ ಸಂಪೂರ್ಣ ಭಾರ ಎಡ ಭುಜದ ಮೇಲೆ ಬಿದ್ದಿತ್ತು. ಪರಿಣಾಮ ಭುಜದ ಮೂಳೆಗಳು ಚೂರಾಗಿದ್ದು, ವೈದ್ಯರು ಸ್ಟೀಲ್ ರಾಡ್ ಹಾಗೂ ಹಲವು ಸ್ಕ್ರೂಗಳನ್ನು ಅಳವಡಿಸಿ ಶಸ್ತ್ರಚಿಕಿತ್ಸೆ ನಡೆಸಬೇಕಾಯಿತು.

ಗಾಯದ ನಂತರ ತಿಂಗಳುಗಳ ಕಾಲ ಬೆಡ್ ರೆಸ್ಟ್, ಫಿಸಿಯೋಥೆರಪಿ ಮತ್ತು ಮಾನಸಿಕ ಒತ್ತಡವನ್ನು ಎದುರಿಸಿದ ನಭಾ, ಸಿನಿಮಾ ಬದುಕಿನಿಂದ ಸಂಪೂರ್ಣ ದೂರ ಉಳಿಯಬೇಕಾಯಿತು. ಆದರೆ ಅದೇ ಅವಧಿಯಲ್ಲಿ ಚಿತ್ರಕಲೆ, ಸಂಗೀತ, ನೃತ್ಯ, ಪುಸ್ತಕ ಓದು ಹಾಗೂ ಕುಟುಂಬದೊಂದಿಗೆ ಸಮಯ ಕಳೆಯುವ ಮೂಲಕ ಹೊಸ ಬದುಕು ಕಟ್ಟಿಕೊಂಡಿದ್ದಾರೆ.

ಈಗ ಸಂಪೂರ್ಣವಾಗಿ ಚೇತರಿಸಿಕೊಂಡಿರುವ ನಭಾ ನಟೇಶ್, ‘ನಾಗಬಂಧಂ’ ಮತ್ತು ‘ಸ್ವಯಂಭು’ ಸಿನಿಮಾಗಳ ಮೂಲಕ ಮತ್ತೊಮ್ಮೆ ಬೆಳ್ಳಿತೆರೆಗೆ ಭರ್ಜರಿ ಮರಳಲು ಸಜ್ಜಾಗಿದ್ದಾರೆ.

ಖಾಲಿ ನಿವೇಶನದಲ್ಲಿ ಪಾರ್ಕಿಂಗ್ ಕೊಟ್ರೆ 35 ವರ್ಷ ಟ್ಯಾಕ್ಸ್ ಫ್ರೀ ಅಂತೆ! ರಾಜ್ಯ ಸರ್ಕಾರದ ನೀತಿಗೆ ವ್ಯಾಪಕ ವಿರೋಧ

ಬೆಂಗಳೂರು: ಖಾಲಿ ನಿವೇಶನಗಳಲ್ಲಿ ಪಾರ್ಕಿಂಗ್ ವ್ಯವಸ್ಥೆ ನೀಡಿದರೆ 15ರಿಂದ 35 ವರ್ಷಗಳವರೆಗೆ ಆಸ್ತಿ ತೆರಿಗೆ ವಿನಾಯಿತಿ ನೀಡುವ ರಾಜ್ಯ ಸರ್ಕಾರದ ಹೊಸ ಪಾರ್ಕಿಂಗ್ ನೀತಿ ಚರ್ಚೆಗೆ ಕಾರಣವಾಗಿದೆ.

ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಮತ್ತು ಸಂಚಾರ ಪೊಲೀಸರು ಸೇರಿ ರೂಪಿಸುತ್ತಿರುವ “ಪಾರ್ಕಿಂಗ್ ನೀತಿ–2026” ಕರಡು ಪ್ರಕಟವಾಗುವ ಮುನ್ನವೇ ಈ ಯೋಜನೆಗೆ ಸಂಬಂಧಿಸಿದಂತೆ ಆಸ್ತಿ ಮಾಲೀಕರಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ.

ಸರ್ಕಾರದ ಪ್ರಸ್ತಾವನೆಯ ಪ್ರಕಾರ, ಖಾಲಿ ನಿವೇಶನಗಳಲ್ಲಿ ಮಲ್ಟಿ-ಸ್ಟೋರಿ ಅಥವಾ ಆಟೋಮೇಟೆಡ್ ಪಾರ್ಕಿಂಗ್ ನಿರ್ಮಿಸಿದರೆ ದೀರ್ಘಾವಧಿಯ ತೆರಿಗೆ ವಿನಾಯಿತಿ ನೀಡಲಾಗುತ್ತದೆ. ಆದರೆ ಇದರಿಂದ ತಮ್ಮ ಖಾಸಗಿ ಜಾಗದ ಮೇಲೆ ನಿಯಂತ್ರಣ ಕಳೆದುಕೊಳ್ಳುವ ಭೀತಿ ಇದೆ ಎಂದು ಕೆಲ ಮಾಲೀಕರು ಆರೋಪಿಸಿದ್ದಾರೆ.

ಇನ್ನು ಕೆಲವರು ಈ ಯೋಜನೆಯನ್ನು ಬೆಂಬಲಿಸುತ್ತಿದ್ದು, ವರ್ಷಗಳಿಂದ ಬಳಕೆಯಾಗದೇ ಇರುವ ನಿವೇಶನಗಳಿಂದ ಆದಾಯ ಪಡೆಯಲು ಇದು ಉತ್ತಮ ಅವಕಾಶ ಎಂದು ಅಭಿಪ್ರಾಯಪಟ್ಟಿದ್ದಾರೆ.

ಸರ್ಕಾರದ ಈ ಯೋಜನೆ ಜಾರಿಗೆ ಬಂದರೆ ಪಾರ್ಕಿಂಗ್ ಸಮಸ್ಯೆಗೆ ಪರಿಹಾರ ಸಿಗುವ ಜೊತೆಗೆ ಖಾಸಗಿ ಮಾಲೀಕರಿಗೂ ದೀರ್ಘಾವಧಿ ಆದಾಯದ ಅವಕಾಶ ಸಿಗಬಹುದು ಎಂದು ಹೇಳಲಾಗುತ್ತಿದೆ. ಆದರೆ ಈ ಯೋಜನೆ ಕುರಿತು ಅಂತಿಮ ತೀರ್ಮಾನ ಹೊರಬರುವ ಮುನ್ನವೇ ಚರ್ಚೆಗಳು ಜೋರಾಗಿದೆ.

ಕೆಆರ್ ಸರ್ಕಲ್‌ನಲ್ಲಿ ಭೀಕರ ಅಪಘಾತ: ಎರಡು BMTC ಬಸ್‌ಗಳ ನಡುವೆ ಡಿಕ್ಕಿ, ವಾಹನಗಳು ಜಖಂ

ಬೆಂಗಳೂರು: ಕೆಆರ್ ಸರ್ಕಲ್ ಬಳಿ ಎರಡು ಬಿಎಂಟಿಸಿ ಬಸ್‌ಗಳ ನಡುವೆ ಭೀಕರ ಅಪಘಾತ ಸಂಭವಿಸಿದೆ.

ಇಂದಿರಾನಗರ ಕಡೆಯಿಂದ ಬಂದ ಎಲೆಕ್ಟ್ರಿಕ್ ಬಸ್ ಮತ್ತೊಂದು ಬಸ್‌ಗೆ ಹಿಂಬದಿಯಿಂದ ಗುದ್ದಿದ ಪರಿಣಾಮ ಎರಡು ಬಸ್‌ಗಳ ಮುಂಭಾಗ ಹಾಗೂ ಹಿಂಭಾಗ ಸಂಪೂರ್ಣವಾಗಿ ಜಖಂ ಆಗಿವೆ.

ಘಟನೆಯ ವೇಳೆ ಬಸ್‌ನ ಮುಂಭಾಗದಲ್ಲಿ ಕೂತಿದ್ದ ಮಹಿಳೆಯ ಕಾಲು ಸಿಕ್ಕಿಕೊಂಡು ಪರದಾಡಿದ ಘಟನೆ ನಡೆದಿದೆ. ತಕ್ಷಣ ಸ್ಥಳೀಯರು ಹಾಗೂ ಸಿಬ್ಬಂದಿ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ.

ಪ್ರಾಥಮಿಕ ಮಾಹಿತಿ ಪ್ರಕಾರ ಮೂವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ.

ಕೆಆರ್ ಸರ್ಕಲ್ ಪ್ರದೇಶದಲ್ಲಿ ಕೆಲಕಾಲ ಸಂಚಾರ ಅಸ್ತವ್ಯಸ್ತವಾಗಿದ್ದು, ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ನಿಯಂತ್ರಿಸಿದ್ದಾರೆ.

ಹಾವೇರಿ! ಕರ್ತವ್ಯದ ವೇಳೆ ಹುತಾತ್ಮರಾದ ನೌಕಾಪಡೆಯ ಯೋಧ!

ಹಾವೇರಿ: ಕರ್ತವ್ಯದ ವೇಳೆ ಭಾರತೀಯ ನೌಕಾಪಡೆಯ ಯೋಧ ಹುತಾತ್ಮರಾದ ಘಟನೆ ಕೇರಳದ ಕೊಚ್ಚಿಯಲ್ಲಿ ನಡೆದಿದೆ.

ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಉಪ್ಪುಣಸಿ ಗ್ರಾಮದ ನಿವಾಸಿ ಯಶೋಧರ ವಡ್ಡರ್ (29) ಭಾರತೀಯ ನೌಕಾಪಡೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಅವರು ಫೈರಿಂಗ್ ತರಬೇತಿ ವೇಳೆ ಕರ್ತವ್ಯ ನಿರ್ವಹಿಸುತ್ತಿದ್ದಾಗ ಹುತಾತ್ಮರಾಗಿದ್ದಾರೆ ಎಂದು ತಿಳಿದುಬಂದಿದೆ.

ಯಶೋಧರ ವಡ್ಡರ್ ಅವರು 2016ರಲ್ಲಿ ನೌಕಾಪಡೆಗೆ ಸೇರ್ಪಡೆಯಾಗಿ ಕಳೆದ 10 ವರ್ಷಗಳಿಂದ ದೇಶ ಸೇವೆಯಲ್ಲಿ ತೊಡಗಿಸಿಕೊಂಡಿದ್ದರು.

ಹುತಾತ್ಮ ಯೋಧನ ಪಾರ್ಥಿವ ಶರೀರ ಸ್ವಗ್ರಾಮ ಉಪ್ಪುಣಸಿಗೆ ಆಗಮಿಸಿದ್ದು, ಗ್ರಾಮದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಸಲು ಸಿದ್ಧತೆಗಳು ನಡೆಯುತ್ತಿವೆ.

ದೇಶ ಸೇವೆಯಲ್ಲಿ ಪ್ರಾಣ ತ್ಯಾಗ ಮಾಡಿದ ವೀರ ಯೋಧನ ನಿಧನಕ್ಕೆ ಗ್ರಾಮಸ್ಥರು, ಬಂಧು-ಬಳಗ ಹಾಗೂ ವಿವಿಧ ಸಂಘಟನೆಗಳು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಸಿಸಿಬಿ ಮೆಗಾ ಆಪರೇಷನ್: 30ಕ್ಕೂ ಹೆಚ್ಚು ರೌಡಿಶೀಟರ್ ಮನೆಗಳ ಮೇಲೆ ದಾಳಿ!

ಬೆಂಗಳೂರು: ನಗರದಲ್ಲಿ ಅಪರಾಧ ಚಟುವಟಿಕೆಗಳ ವಿರುದ್ಧ ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ.

ಸಿಸಿಬಿ ಡಿಸಿಪಿ ಶ್ರೀಹರಿಬಾಬು ನೇತೃತ್ವದಲ್ಲಿ ನಡೆದ ಈ ದಾಳಿಯಲ್ಲಿ ಬೆಂಗಳೂರು ಪೂರ್ವ ಮತ್ತು ಈಶಾನ್ಯ ವಿಭಾಗಗಳಲ್ಲಿ 30ಕ್ಕೂ ಹೆಚ್ಚು ರೌಡಿಶೀಟರ್‌ಗಳ ಮನೆಗಳ ಮೇಲೆ ಏಕಾಏಕಿ ಶೋಧ ನಡೆಸಲಾಗಿದೆ.

ಇಂದಿರಾನಗರದ ರೌಡಿಶೀಟರ್ ಪ್ರಭಾಕರ್ ಎಂಬಾತನ ಮನೆಯಲ್ಲಿ ಮಾರಕಾಸ್ತ್ರಗಳು ಪತ್ತೆಯಾಗಿದ್ದು, ಅವುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪೊಲೀಸರು ವಶಪಡಿಸಿಕೊಂಡ ಮಾರಕಾಸ್ತ್ರಗಳ ಫೋಟೋಗಳನ್ನು ಬಿಡುಗಡೆ ಮಾಡಿದ್ದು, ಅಪರಾಧ ಹಿನ್ನೆಲೆ ಹೊಂದಿರುವವರಿಗೆ ಕಠಿಣ ಎಚ್ಚರಿಕೆ ನೀಡಲಾಗಿದೆ.

ಸಿಸಿಬಿ ತಂಡವು ಮುಂದೆಯೂ ಇಂತಹ ಕಾರ್ಯಾಚರಣೆಗಳನ್ನು ಮುಂದುವರಿಸುವುದಾಗಿ ತಿಳಿಸಿದ್ದು, ಸಮಾಜದ ಶಾಂತಿ ಕಾಪಾಡಲು ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸ್ಪಷ್ಟಪಡಿಸಿದೆ.