Home Blog

ನಾಳೆ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ; ಬೆಳಗ್ಗೆ ರಾಜಭವನಕ್ಕೆ ಭೇಟಿ ನೀಡಿ ಅಧಿಕೃತ ನಿರ್ಧಾರ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಳೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದು ಬಹುತೇಕ ಖಚಿತವಾಗಿದೆ. ರಾಜ್ಯ ರಾಜಕೀಯದಲ್ಲಿ ಹಲವು ದಿನಗಳಿಂದ ನಡೆಯುತ್ತಿದ್ದ ಚರ್ಚೆಗಳಿಗೆ ಇದೀಗ ಅಧಿಕೃತ ಸ್ಪಷ್ಟತೆ ಸಿಕ್ಕಂತಾಗಿದೆ.

ಸಿದ್ದರಾಮಯ್ಯ ಅವರು ನಾಳೆ ಬೆಳಗ್ಗೆ 11:30ಕ್ಕೆ ರಾಜಭವನಕ್ಕೆ ತೆರಳಿ ರಾಜ್ಯಪಾಲರಿಗೆ ರಾಜೀನಾಮೆ ಸಲ್ಲಿಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ರಾಜೀನಾಮೆ ಕುರಿತ ವೇಳಾಪಟ್ಟಿಯೂ ಇದೀಗ ಸ್ಪಷ್ಟವಾಗಿರುವುದು ರಾಜಕೀಯ ವಲಯದಲ್ಲಿ ಮತ್ತಷ್ಟು ಕುತೂಹಲಕ್ಕೆ ಕಾರಣವಾಗಿದೆ.

ರಾಜೀನಾಮೆ ಸಲ್ಲಿಸುವ ಮೊದಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸಚಿವರು ಹಾಗೂ ಆಪ್ತ ಶಾಸಕರಿಗೆ ಉಪಹಾರ ಕೂಟಕ್ಕೆ ಆಹ್ವಾನ ನೀಡಿದ್ದಾರೆ. ಈ ಬ್ರೇಕ್‌ಫಾಸ್ಟ್ ಸಭೆಯಲ್ಲಿ ಮುಂದಿನ ರಾಜಕೀಯ ಬೆಳವಣಿಗೆಗಳು ಹಾಗೂ ಪಕ್ಷದ ಒಳಚರ್ಚೆಗಳ ಬಗ್ಗೆ ಸಮಾಲೋಚನೆ ನಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ.

ಬಳಿಕ ರಾಜಭವನಕ್ಕೆ ತೆರಳಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲಿರುವ ಸಿದ್ದರಾಮಯ್ಯ, ನಂತರ ಸುದ್ದಿಗೋಷ್ಠಿ ನಡೆಸಿ ರಾಜ್ಯ ರಾಜಕೀಯದ ಇತ್ತೀಚಿನ ಬೆಳವಣಿಗೆಗಳು ಹಾಗೂ ತಮ್ಮ ನಿರ್ಧಾರದ ಕುರಿತು ಸ್ಪಷ್ಟನೆ ನೀಡುವ ಸಾಧ್ಯತೆಯಿದೆ.

ಇದೇ ವೇಳೆ ಇಂದು ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಅವರ 62ನೇ ಪುಣ್ಯತಿಥಿ ಅಂಗವಾಗಿ ವಿಧಾನಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಭಾಗವಹಿಸಿದ್ದರು. ನೆಹರು ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದ ಅವರು, ದೇಶದ ಅಭಿವೃದ್ಧಿಗೆ ನೆಹರು ನೀಡಿದ ಕೊಡುಗೆಯನ್ನು ಸ್ಮರಿಸಿದರು.

ಕಾರ್ಯಕ್ರಮದ ಬಳಿಕ ಮಾಧ್ಯಮಗಳು ದೆಹಲಿ ಪ್ರವಾಸ ಹಾಗೂ ರಾಜ್ಯ ರಾಜಕೀಯದ ಬೆಳವಣಿಗೆಗಳ ಬಗ್ಗೆ ಪ್ರಶ್ನಿಸಿದರೂ, ಮುಖ್ಯಮಂತ್ರಿ ಯಾವುದೇ ವಿವರವಾದ ಪ್ರತಿಕ್ರಿಯೆ ನೀಡಲಿಲ್ಲ. ರಾಜಕೀಯ ಬೆಳವಣಿಗೆಗಳ ಕುರಿತು ಪ್ರಶ್ನೆ ಕೇಳಿದಾಗ, ನಾಳೆ ಮಾತನಾಡುತ್ತೇನೆ, ಏನೇ ಇದ್ದರೂ ನಾಳೆಯೇ ಮಾತನಾಡುತ್ತೇನೆ ಎಂದು ಒಂದೇ ಸಾಲಿನಲ್ಲಿ ಉತ್ತರಿಸಿ ಸಿದ್ದರಾಮಯ್ಯ ಅಲ್ಲಿಂದ ತೆರಳಿದ್ದರು.

ಆಧುನಿಕ ಭಾರತದ ನಿರ್ಮಾಣದಲ್ಲಿ ನೆಹರೂ ಅವರ ಪಾತ್ರ ದೊಡ್ಡದು: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಆಧುನಿಕ ಭಾರತದ ನಿರ್ಮಾಣದಲ್ಲಿ ನೆಹರೂ ಅವರ ಪಾತ್ರ ದೊಡ್ದದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು. ಅವರು ಇಂದು ವಿಧಾನಸೌಧದ ಪೂರ್ವ ದಿಕ್ಕಿನಲ್ಲಿರುವ ಮಾಜಿ ಪ್ರಧಾನಮಂತ್ರಿ ಜವಾಹರಲಾಲ್ ನೆಹರು ಅವರ ಪುಣ್ಯ ಸ್ಮರಣೆ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಭಾವಚಿತ್ರಕ್ಕೆ ಪುಷ್ಪರ್ಚನೆ ಮಾಡಿ ಮಾತನಾಡಿದರು.

ದೇಶದಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸಿದರು

ನೆಹರೂ ಅವರು ದೇಶಕ್ಕೆ ಸ್ವಾತಂತ್ರ್ಯ ಬಂದ ನಂತರದ ಮೊದಲ ಪ್ರಧಾನಮಂತ್ರಿಗಳಾಗಿ 17 ವರ್ಷಗಳ ಕಾಲ ಜನರ ಸೇವೆ ಮಾಡಿದ್ದಾರೆ. ಸಮಾಜವಾದಿ ಮತ್ತು ಮಿಶ್ರ ಆರ್ಥಿಕತೆಗೆ ಹೆಚ್ಚು ಒತ್ತು ನೀಡಿ ಬೃಹತ್ ಅಣೆಕಟ್ಟುಗಳ ನಿರ್ಮಾಣ, ಶಿಕ್ಷಣ, ಸಹಕಾರ ಕ್ಷೇತ್ರಗಳಲ್ಲಿ ವೈಜ್ಞಾನಿಕ ಮನೋಭಾವವನ್ನು ಬೆಳೆಸಲು ನೆಹರೂ ಅವರು ಕಾರಣಕರ್ತರು ಎಂದರು.

ನೆಹರೂ ಅವರ ಹಾದಿಯಲ್ಲಿ ನಡೆಯುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ

ಪಂಚವಾರ್ಷಿಕ ಯೋಜನೆಗಳನ್ನು ರೂಪಿಸಿ ದೇಶದ ಪ್ರಗತಿಯನ್ನು ವೈಜ್ಞಾನಿಕವಾಗಿ ಸಾಧಿಸುವ ಪ್ರಯತ್ನ ಮಾಡಿದ್ದರು. ಅವರು ಅಗಲಿ 62 ವರ್ಷಗಳಾಗಿವೆ. ಈ ಸಂದರ್ಭದಲ್ಲಿ ಅವರನ್ನು ಸ್ಮರಿಸಿ ಅವರ ಹಾದಿಯಲ್ಲಿ ನಡೆಯುವ ಪ್ರಾಮಾಣಿಕ ಪ್ರಯತ್ನವನ್ನು ಮಾಡುವುದಾಗಿ ತಿಳಿಸಿದರು.ಅವರ ಆದರ್ಶಗಳು ಸದಾ ಮೇಲ್ಪಂಕ್ತಿಯಲ್ಲಿವೆ ಎಂದರು.

ನಕಲಿ ಅಂಕಪಟ್ಟಿ ಜಾಲ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು ನೀಡಲು ಹೈಕೋರ್ಟ್ ನಿರಾಕರಣೆ

ಬೆಂಗಳೂರು: ನಕಲಿ ಅಂಕಪಟ್ಟಿಗಳನ್ನು ಸೃಷ್ಟಿಸಿ ವಂಚನೆ ನಡೆಸಿದ ಆರೋಪಕ್ಕೆ ಸಂಬಂಧಿಸಿದ ಗಂಭೀರ ಸೈಬರ್ ಅಪರಾಧ ಪ್ರಕರಣದಲ್ಲಿ ಪ್ರಮುಖ ಆರೋಪಿಗೆ ಜಾಮೀನು ನೀಡಲು ಹೈಕೋರ್ಟ್ ನಿರಾಕರಿಸಿದೆ. ಅರ್ಜಿದಾರರ ವಿರುದ್ಧದ ಆರೋಪಗಳ ಗಂಭೀರತೆಯನ್ನು ಉಲ್ಲೇಖಿಸಿದ ನ್ಯಾಯಪೀಠ, ಜಾಮೀನು ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿದೆ.

ಪ್ರಕರಣದ ಪ್ರಮುಖ ಆರೋಪಿ ಹಾಗೂ ನವದೆಹಲಿ ನಿವಾಸಿಯಾಗಿರುವ ರಾಜೀವ್ ಸಿಂಗ್ ಅರೋರಾ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ತ್ಯಾಗರಾಜ ಎನ್. ಇನಾವಳಿ ಅವರಿದ್ದ ಏಕಸದಸ್ಯ ಪೀಠ ನಡೆಸಿತು.

ಪ್ರಕರಣದ ಇತರೆ ಆರೋಪಿಗಳಿಗೆ ಈಗಾಗಲೇ ಜಾಮೀನು ನೀಡಲಾಗಿರುವುದರಿಂದ ತಮಗೂ ಜಾಮೀನು ನೀಡಬೇಕು ಎಂದು ಅರ್ಜಿದಾರರು ವಾದಿಸಿದ್ದರು. ಆದರೆ ಈ ವಾದವನ್ನು ತಿರಸ್ಕರಿಸಿದ ನ್ಯಾಯಪೀಠ, ನಕಲಿ ಅಂಕಪಟ್ಟಿಗಳನ್ನು ಸೃಷ್ಟಿಸಿದ ಮುಖ್ಯ ಆರೋಪ ಅರ್ಜಿದಾರರ ಮೇಲಿದೆ ಎಂದು ಸ್ಪಷ್ಟಪಡಿಸಿದೆ.

ಇತರೆ ಆರೋಪಿಗಳ ವಿರುದ್ಧ ಕೇವಲ ಆ ದಾಖಲೆಗಳನ್ನು ಹಂಚಿಕೆ ಮಾಡಿದ ಆರೋಪವಷ್ಟೇ ಇದ್ದು, ಪ್ರಮುಖ ಆರೋಪಿಯ ಪಾತ್ರ ಸಂಪೂರ್ಣ ವಿಭಿನ್ನವಾಗಿದೆ. ಹೀಗಾಗಿ ಇತರೆ ಆರೋಪಿಗಳಿಗೆ ಜಾಮೀನು ಸಿಕ್ಕಿದೆ ಎಂಬ ಕಾರಣಕ್ಕೆ ಅರ್ಜಿದಾರರಿಗೂ ಜಾಮೀನು ನೀಡಲು ಸಾಧ್ಯವಿಲ್ಲ ಎಂದು ನ್ಯಾಯಪೀಠ ತಿಳಿಸಿದೆ.

ವಿಚಾರಣಾ ನ್ಯಾಯಾಲಯದಲ್ಲಿ ಪ್ರಕರಣ ವಿಳಂಬವಾಗುತ್ತಿರುವುದಕ್ಕೆ ತನಿಖಾ ಸಂಸ್ಥೆ ಕಾರಣವಲ್ಲ ಎಂದು ಹೇಳಿದ ನ್ಯಾಯಪೀಠ, ಸಹ-ಆರೋಪಿಗಳು ಸಕಾಲಕ್ಕೆ ನ್ಯಾಯಾಲಯಕ್ಕೆ ಹಾಜರಾಗದಿರುವುದೇ ವಿಳಂಬಕ್ಕೆ ಕಾರಣ ಎಂದು ಅಭಿಪ್ರಾಯಪಟ್ಟಿದೆ.

ಅರ್ಜಿದಾರರು ನವದೆಹಲಿಯ ಖಾಯಂ ನಿವಾಸಿಯಾಗಿರುವುದರಿಂದ, ಜಾಮೀನು ನೀಡಿದರೆ ಮುಂದಿನ ವಿಚಾರಣೆಗೆ ಅವರನ್ನು ಹಾಜರುಪಡಿಸುವುದು ಕಷ್ಟವಾಗಬಹುದು ಎಂದು ಪೀಠ ಗಮನಿಸಿದೆ.

ಇದೇ ವೇಳೆ, ಈ ಹಿಂದೆ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾಗೊಂಡ ಬಳಿಕ ಹೊಸ ಪೂರಕ ಸನ್ನಿವೇಶಗಳು ಅಥವಾ ಬದಲಾದ ಪರಿಸ್ಥಿತಿಗಳು ಯಾವುದೂ ಕಂಡುಬಂದಿಲ್ಲ ಎಂದು ಹೇಳಿ, ಎರಡನೇ ಬಾರಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನೂ ಹೈಕೋರ್ಟ್ ತಿರಸ್ಕರಿಸಿದೆ.

ಪ್ರಕರಣದ ಹಿನ್ನೆಲೆ

ಕಲಬುರಗಿಯ ಏಶಿಯನ್ ಮಾಲ್‌ನ ಮೊದಲ ಮಹಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಐಫಾರ್‌ಯು ಗ್ಲ್ಯಾಮ್ ಚೋಯಿಸ್ ಎಂಬ ಬಟ್ಟೆ ಅಂಗಡಿಯ ಒಳಭಾಗದಲ್ಲಿ ವಿವಿಧ ವಿಶ್ವವಿದ್ಯಾಲಯಗಳ ಲೋಗೋಗಳನ್ನು ಬಳಸಿ ನಕಲಿ ಅಂಕಪಟ್ಟಿಗಳನ್ನು ಸೃಷ್ಟಿಸಿ ಮಾರಾಟ ಮಾಡಲಾಗುತ್ತಿದೆ ಎಂಬ ಮಾಹಿತಿ ಪೊಲೀಸರಿಗೆ ಲಭ್ಯವಾಗಿತ್ತು.

ಈ ಮಾಹಿತಿ ಆಧರಿಸಿ ಪೊಲೀಸರು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡು ಅಂಗಡిపై ದಾಳಿ ನಡೆಸಿದ್ದರು. ದಾಳಿಯ ವೇಳೆ ನಕಲಿ ದಾಖಲೆಗಳ ಜಾಲ ಪತ್ತೆಯಾಗಿದ್ದು, ಆರೋಪಿಗಳ ವಿರುದ್ಧ ಕಲಬುರಗಿ ನಗರದ ಸಿಸಿಬಿ/ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದಲ್ಲಿ ಭಾರತೀಯ ದಂಡ ಸಂಹಿತೆಯ 420, 465, 468, 471 ಸೆಕ್ಷನ್‌ಗಳ ಜೊತೆಗೆ ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 66 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಬಳಿಕ ಪ್ರಮುಖ ಆರೋಪಿ ರಾಜೀವ್ ಸಿಂಗ್ ಅರೋರಾ ಅಲಿಯಾಸ್ ಅಭನೀಶ್ ಕುಮಾರ್ ಸೇರಿದಂತೆ ಹಲವರನ್ನು ಬಂಧಿಸಲಾಗಿತ್ತು.

ಈ ಹಿಂದೆ ಪ್ರಮುಖ ಆರೋಪಿಯ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿತ್ತು. ನಂತರ ಇತರೆ ಆರೋಪಿಗಳಿಗೆ ಜಾಮೀನು ದೊರೆತಿದ್ದರೂ, ರಾಜೀವ್ ಸಿಂಗ್ ಅರೋರಾ ಸಲ್ಲಿಸಿದ್ದ ಎರಡನೇ ಜಾಮೀನು ಅರ್ಜಿಯನ್ನೂ ಇದೀಗ ನ್ಯಾಯಾಲಯ ತಿರಸ್ಕರಿಸಿದೆ.

ಸಿದ್ದರಾಮಯ್ಯ ಹಳೆಯ ಹುಲಿ, ಯಾವಾಗ ಯಾವ ರೀತಿಯ ಆಟ ಆಡ್ತಾರೋ ಗೊತ್ತಿಲ್ಲ: ಶೋಭಾ ಕರಂದ್ಲಾಜೆ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಮುಖ್ಯಮಂತ್ರಿ ಸ್ಥಾನ ಕುರಿತ ಚರ್ಚೆಗಳು ಜೋರಾಗಿರುವ ನಡುವೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಾಂಗ್ರೆಸ್ ನಾಯಕರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಹಳೆಯ ಹುಲಿ. ಯಾವಾಗ ಯಾವ ರೀತಿಯ ರಾಜಕೀಯ ಆಟ ಆಡುತ್ತಾರೆ ಎಂಬುದು ಯಾರಿಗೂ ಗೊತ್ತಾಗುವುದಿಲ್ಲ ಎಂದು ವ್ಯಂಗ್ಯವಾಡಿದರು.

ಸಿದ್ದರಾಮಯ್ಯ ರಾಜೀನಾಮೆ ನೀಡುವವರೆಗೆ ಮುಖ್ಯಮಂತ್ರಿ ಬದಲಾವಣೆ ಕುರಿತ ಯಾವುದೇ ಚರ್ಚೆಗೆ ಖಚಿತತೆ ಇಲ್ಲ ಎಂದು ಅವರು ಹೇಳಿದರು. ಮೂರು ವರ್ಷದ ಸರ್ಕಾರದಲ್ಲಿ ಎರಡು ವರ್ಷಕ್ಕಿಂತ ಹೆಚ್ಚು ಕಾಲ ಮುಖ್ಯಮಂತ್ರಿ ಬದಲಾವಣೆ ವಿಚಾರವೇ ಕಾಂಗ್ರೆಸ್‌ನಲ್ಲಿ ಚರ್ಚೆಯಾಗುತ್ತಿದೆ. ಜನರ ಸಮಸ್ಯೆಗಳಿಗಿಂತ ಖುರ್ಚಿ ರಾಜಕೀಯಕ್ಕೆ ಹೆಚ್ಚು ಆದ್ಯತೆ ನೀಡಲಾಗುತ್ತಿದೆ ಎಂದು ಆರೋಪಿಸಿದರು.

ರಾಜ್ಯದಲ್ಲಿ ಒಂದು ಕಡೆ ಬರಗಾಲ, ಮತ್ತೊಂದು ಕಡೆ ನೆರೆ ಪರಿಸ್ಥಿತಿ ನಿರ್ಮಾಣವಾಗಿದೆ. ಬೆಂಗಳೂರಿನಲ್ಲಿ ಮಳೆಯಿಂದ ಸಮಸ್ಯೆಗಳು ಉಂಟಾಗುತ್ತಿವೆ. ಗಾರ್ಬೇಜ್ ಹಗರಣದಂತಹ ವಿಚಾರಗಳು ಚರ್ಚೆಗೆ ಗ್ರಾಸವಾಗಿವೆ. ಆದರೆ ಇವೆಲ್ಲವನ್ನು ಬಿಟ್ಟು ಕಾಂಗ್ರೆಸ್ ನಾಯಕರು ಅಧಿಕಾರಕ್ಕಾಗಿ ಪರಸ್ಪರ ಹೋರಾಟ ನಡೆಸುತ್ತಿದ್ದಾರೆ ಎಂದು ಶೋಭಾ ಕರಂದ್ಲಾಜೆ ಕಿಡಿಕಾರಿದರು.

ಸಿದ್ದರಾಮಯ್ಯ ತಮ್ಮ ಕುರ್ಚಿ ಉಳಿಸಿಕೊಳ್ಳಲು ಯತ್ನಿಸುತ್ತಿದ್ದರೆ, ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆಗಲು ಪ್ರಯತ್ನಿಸುತ್ತಿದ್ದಾರೆ. ಈ ನಡುವೆ ರಾಜ್ಯದ ಜನರ ಸಮಸ್ಯೆಗಳು ಕಡೆಗಣನೆಯಾಗುತ್ತಿವೆ ಎಂದು ಅವರು ಆರೋಪಿಸಿದರು.

ಯಾವುದೇ ಸಚಿವರು ಜಿಲ್ಲೆಗಳ ಪ್ರವಾಸ ಮಾಡುತ್ತಿಲ್ಲ. ಅಭಿವೃದ್ಧಿ ಕಾಮಗಾರಿಗಳಿಗೆ ಹಣವಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ. ಜನರ ಕೆಲಸ ಮಾಡಲು ಕಾಂಗ್ರೆಸ್‌ಗೆ 135 ಸ್ಥಾನಗಳನ್ನು ನೀಡಿದ್ದಾರೆ. ಆದ್ದರಿಂದ ಅಧಿಕಾರದ ರಾಜಕೀಯ ಬಿಟ್ಟು ಜನರ ಪರ ಕೆಲಸ ಮಾಡಬೇಕು ಎಂದು ಶೋಭಾ ಕರಂದ್ಲಾಜೆ ಸರ್ಕಾರಕ್ಕೆ ತಿರುಗೇಟು ನೀಡಿದರು.

‘ಸಿದ್ದರಾಮಯ್ಯ ಬಳಿಕ ಕಾಂಗ್ರೆಸ್ ಸರ್ಕಾರ ಉಳಿಯಲ್ಲ’: ಅವಧಿಪೂರ್ವ ಚುನಾವಣೆಯ ಸುಳಿವು ಕೊಟ್ಟ ವಿಜಯೇಂದ್ರ!

ಶಿವಮೊಗ್ಗ: ಕರ್ನಾಟಕ ರಾಜಕೀಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಚರ್ಚೆ ಜೋರಾಗಿರುವ ನಡುವೆಯೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಕಾಂಗ್ರೆಸ್ ಸರ್ಕಾರದ ಭವಿಷ್ಯದ ಬಗ್ಗೆ ಭಾರೀ ಭವಿಷ್ಯ ನುಡಿದಿದ್ದಾರೆ. ಸಿದ್ದರಾಮಯ್ಯ ಬಿಟ್ಟು ಬೇರೆ ಯಾರೇ ಸಿಎಂ ಆದರೂ ಸರ್ಕಾರ ಹೆಚ್ಚು ದಿನ ಉಳಿಯುವುದಿಲ್ಲ ಎಂದು ಹೇಳಿದ್ದಾರೆ.

ಕಾಂಗ್ರೆಸ್ ಹೈಕಮಾಂಡ್ ಈಗಾಗಲೇ ರಾಜ್ಯ ಸರ್ಕಾರದ ವೈಫಲ್ಯವನ್ನು ಒಪ್ಪಿಕೊಂಡಿದೆ. ದೆಹಲಿಯಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಸಿದ್ದರಾಮಯ್ಯ ರಾಜೀನಾಮೆ ವಿಚಾರ ಗಂಭೀರವಾಗಿ ಚರ್ಚೆಯಾಗಿದೆ ಎಂದು ವಿಜಯೇಂದ್ರ ಹೇಳಿದರು.

ಸಿದ್ದರಾಮಯ್ಯ ಅನುಭವಸಂಪನ್ನ ಮುಖ್ಯಮಂತ್ರಿ ಆದರೂ ಅವರ ಆಡಳಿತದಲ್ಲಿ ರಾಜ್ಯ ಭ್ರಷ್ಟಾಚಾರದಲ್ಲಿ ಮುಳುಗಿದೆ. ವಾಲ್ಮೀಕಿ ನಿಗಮ, ಮೂಡಾ ಸೇರಿದಂತೆ ಹಲವು ಹಗರಣಗಳು ಸರ್ಕಾರದ ಇಮೇಜ್ ಹಾಳು ಮಾಡಿವೆ ಎಂದು ಆರೋಪಿಸಿದರು.

ಸಿಎಂ ಬದಲಾವಣೆ ನಂತರ ಕಾಂಗ್ರೆಸ್ ಒಳಜಗಳ ಮತ್ತಷ್ಟು ತೀವ್ರವಾಗಲಿದೆ. ಹೊಸ ಮುಖ್ಯಮಂತ್ರಿ ಆಯ್ಕೆ ಸುಲಭವಾಗುವುದಿಲ್ಲ. ಪರಿಣಾಮ ಸರ್ಕಾರದ ಸ್ಥಿರತೆ ಸಂಪೂರ್ಣ ಕುಸಿಯಲಿದೆ ಎಂದು ವಿಜಯೇಂದ್ರ ಎಚ್ಚರಿಕೆ ನೀಡಿದರು.

ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯವಾಗಿದೆ. ಆಡಳಿತ ಯಂತ್ರ ಕುಸಿದಿದೆ. ಜನರ ವಿಶ್ವಾಸ ಕಳೆದುಕೊಂಡ ಕಾಂಗ್ರೆಸ್ ಸರ್ಕಾರದ ಪತನ ಖಚಿತ ಎಂದು ಹೇಳಿದ ಅವರು, ಬಿಜೆಪಿ ಮುಂದಿನ ಚುನಾವಣೆಗೆ ಸಂಘಟನೆ ಬಲಪಡಿಸಿ ಅಧಿಕಾರಕ್ಕೆ ಬರಲು ಸಜ್ಜಾಗಿದೆ ಎಂದರು.

ಐಪಿಎಲ್ ಬೆಟ್ಟಿಂಗ್ ಮೇಲೆ ಟೌನ್ ಪೊಲೀಸರ ರೇಡ್… ಅಮಿತ್ ಪೂಜಾರ್ ಎಸ್ಕೇಪ್!

ಗದಗ: ಐಪಿಎಲ್ ಕ್ರಿಕೆಟ್ ಹುಚ್ಚನ್ನು ಬಂಡವಾಳ ಮಾಡಿಕೊಂಡು ಸಾರ್ವಜನಿಕ ರಸ್ತೆಯನ್ನೇ ಬೆಟ್ಟಿಂಗ್ ಅಡ್ಡೆಯಾಗಿ ಮಾರ್ಪಡಿಸಿದ್ದ ಜೂಜಾಟ ಗ್ಯಾಂಗ್ ಮೇಲೆ ಗದಗ ಟೌನ್ ಪೊಲೀಸರು ಸಿನಿಮೀಯ ಶೈಲಿಯಲ್ಲಿ ದಾಳಿ ನಡೆಸಿ ಒಬ್ಬ ಆರೋಪಿಯನ್ನು ಬಂಧಿಸಿರುವ ಘಟನೆ ನಗರದಲ್ಲಿ ಬೆಳಕಿಗೆ ಬಂದಿದೆ. ಮತ್ತೋರ್ವ ಆರೋಪಿ ಪರಾರಿಯಾಗಿದ್ದಾನೆ.

ನಗರದ ಕಲಾಮಂದಿರ ರಸ್ತೆಯ ಶ್ರೀ ತೋಂಟದಾರ್ಯ ವಾಣಿಜ್ಯ ಮಳಿಗೆ ಎದುರು ಐಪಿಎಲ್ ಟಿ-20 ಪಂದ್ಯಾವಳಿಯ ಟಾಸ್ ಹಾಗೂ ಗೆಲುವಿನ ಲೆಕ್ಕಾಚಾರ ಮೇಲೆ ಸಾರ್ವಜನಿಕರಿಂದ ಹಣ ಪಣಕ್ಕಿಟ್ಟು ಅಕ್ರಮ ಬೆಟ್ಟಿಂಗ್ ನಡೆಸಲಾಗುತ್ತಿತ್ತು. “100 ರೂ. ಹಾಕಿ 200 ರೂ. ಗೆಲ್ಲಿ” ಎಂಬ ಆಮಿಷವೊಡ್ಡಿ ಯುವಕರನ್ನು ಸೆಳೆಯಲಾಗುತ್ತಿತ್ತು ಎಂದು ಪೊಲೀಸ್ ತನಿಖೆಯಲ್ಲಿ ಬಹಿರಂಗವಾಗಿದೆ.

ಬಂಧಿತ ಆರೋಪಿಯನ್ನು ಪ್ರಶಾಂತಗೌಡ ಬಾಪುಗೌಡ ಪಾಟೀಲ್ ಎಂದು ಗುರುತಿಸಲಾಗಿದ್ದು, ಅಮಿತ್ ಪರಶುರಾಮ ಪೂಜಾರ್ ಎಂಬಾತ ಪರಾರಿಯಾಗಿದ್ದಾನೆ. ಆರೋಪಿಗಳು ಗುಜರಾತ್ ಟೈಟನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಐಪಿಎಲ್ ಪಂದ್ಯವನ್ನು ನೆಪ ಮಾಡಿಕೊಂಡು ಸಾರ್ವಜನಿಕರಿಂದ ಹಣ ಸಂಗ್ರಹಿಸಿ ಜೂಜಾಟ ಆಡಿಸುತ್ತಿದ್ದರು ಎನ್ನಲಾಗಿದೆ.

ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಗದಗ ಟೌನ್ ಪೊಲೀಸ್ ಠಾಣೆಯ ಪಿಎಸ್‌ಐ ಆರ್.ಆರ್. ಮುಂಡೇವಾಡಗಿ ನೇತೃತ್ವದ ತಂಡ, ಸ್ಥಳದಿಂದ ಬೆಟ್ಟಿಂಗ್ ಚೀಟಿ, ಬಾಲ್ ಪೆನ್ ಹಾಗೂ 500 ರೂ. ನಗದು ವಶಪಡಿಸಿಕೊಂಡಿದೆ.

ಈ ಕುರಿತು ಗದಗ ಟೌನ್ ಪೊಲೀಸ್ ಠಾಣೆಯಲ್ಲಿ ಕ್ರೈಂ ನಂ. 82/2026 ಅಡಿಯಲ್ಲಿ ಕರ್ನಾಟಕ ಪೊಲೀಸ್ (ತಿದ್ದುಪಡಿ) ಕಾಯ್ದೆ 2021ರ ಕಲಂ 78(1)(a)(vi) ಹಾಗೂ ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 112 ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಪರಾರಿಯಾದ ಆರೋಪಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

CM ಬದಲಾವಣೆ ವಿಚಾರ: ಭಗವಂತನ ದಯೆಯಿಂದ ಒಳ್ಳೆ ಕಾಲ ಕೂಡಿ ಬಂದಿದೆ ಎಂದ ಇಕ್ಬಾಲ್ ಹುಸೇನ್

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮುಖ್ಯಮಂತ್ರಿ ಸ್ಥಾನ ಬದಲಾವಣೆ ಕುರಿತು ಚರ್ಚೆಗಳು ಜೋರಾಗಿರುವ ನಡುವೆಯೇ, ಶಾಸಕ ಇಕ್ಬಾಲ್ ಹುಸೇನ್ ನೀಡಿರುವ ಹೇಳಿಕೆ ಹೊಸ ರಾಜಕೀಯ ಕುತೂಹಲಕ್ಕೆ ಕಾರಣವಾಗಿದೆ. ಡಿಕೆ ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಪಟ್ಟ ಸಿಗುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಭಗವಂತನ ದಯೆಯಿಂದ ಒಳ್ಳೆಯ ಕಾಲ ಬಂದಿದೆ ಎಂದು ಭಾವುಕರಾಗಿ ಹೇಳಿದರು.

ಮಾಧ್ಯಮಗಳೊಂದಿಗೆ ಮಾತನಾಡಿದ ಇಕ್ಬಾಲ್ ಹುಸೇನ್, ನಮ್ಮ ನಾಯಕನಿಗೆ ಇಡೀ ರಾಜ್ಯದ ಜನರು ಬಯಸಿದ್ದನ್ನು ಭಗವಂತ ನೆರವೇರಿಸಿದ್ದಾನೆ. ದೇವರಿಗೆ ಕೋಟಿ ಕೋಟಿ ನಮಸ್ಕಾರಗಳು ಎಂದು ಹೇಳಿದರು.

ಎಲ್ಲದಕ್ಕೂ ಒಂದು ಇತಿಮಿತಿ ಇರುತ್ತದೆ. ಪಕ್ಷದ ಹೈಕಮಾಂಡ್ ಇದುವರೆಗೆ ಶಿಸ್ತಿನಿಂದ ಇರಲು ಸೂಚಿಸಿತ್ತು. ಸಮಯ ಬಂದಾಗ ಮಾತನಾಡಿ ಎಂದು ಹೇಳಲಾಗಿತ್ತು. ಈಗ ಆ ಸಮಯ ಬಂದಿದೆ. ಹೈಕಮಾಂಡ್ ಅವಕಾಶ ನೀಡಿದೆ. ನಾಯಕರು ಬೆಂಗಳೂರಿಗೆ ಬಂದ ಬಳಿಕ ಅವರೊಂದಿಗೆ ಚರ್ಚೆ ನಡೆಸುತ್ತೇನೆ ಎಂದು ತಿಳಿಸಿದರು.

ಪಕ್ಷದ ಕಾರ್ಯಕರ್ತರು ಹಾಗೂ ನಾಯಕರ ಅಭಿಪ್ರಾಯ ಪಡೆದು ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು. ನಾವೆಲ್ಲರೂ ಪಕ್ಷದ ಶಿಸ್ತನ್ನು ಕಾಪಾಡಿಕೊಳ್ಳಬೇಕು. ನಿನ್ನೆ ರಾತ್ರಿ ನನಗೆ ನಿದ್ದೆಯೇ ಬರಲಿಲ್ಲ. ದೆಹಲಿಯಲ್ಲಿ ಯಾರ ಜೊತೆ ಮಾತನಾಡಬೇಕಿತ್ತೋ ಅವರ ಜೊತೆ ನಿರಂತರ ಸಂಪರ್ಕದಲ್ಲಿದ್ದೆ. ಕ್ಷಣ ಕ್ಷಣದ ಮಾಹಿತಿಯನ್ನು ಪಡೆಯುತ್ತಿದ್ದೆ ಎಂದು ಹೇಳಿದರು.

ನನ್ನ ಆಸೆಯನ್ನು ಈಡೇರಿಸುವ ಕೆಲಸವನ್ನು ಭಗವಂತ ಮಾಡಿದ್ದಾರೆ. ಅವರಿಗೆ ಕೋಟಿ ಕೋಟಿ ಧನ್ಯವಾದಗಳು ಎಂದು ಇಕ್ಬಾಲ್ ಹುಸೇನ್ ತಮ್ಮ ಸಂತೋಷವನ್ನು ವ್ಯಕ್ತಪಡಿಸಿದರು.

ನಾನು ಹಿರಿಯ ಶಾಸಕ; ಸಚಿವ ಸಂಪುಟದಲ್ಲಿ ಅವಕಾಶ ಸಿಗುವ ವಿಶ್ವಾಸವಿದೆ – ಮಾಗಡಿ ಬಾಲಕೃಷ್ಣ

ಬೆಂಗಳೂರು: ಮುಂದಿನ ಸಚಿವ ಸಂಪುಟ ಪುನಾರಚನೆ ಅಥವಾ ವಿಸ್ತರಣೆ ವೇಳೆ ತಮಗೂ ಸಚಿವ ಸ್ಥಾನ ಸಿಗುವ ವಿಶ್ವಾಸವಿದೆ ಎಂದು ಕಾಂಗ್ರೆಸ್ ಶಾಸಕ ಮಾಗಡಿ ಬಾಲಕೃಷ್ಣ ಹೇಳಿದ್ದಾರೆ. ತಾವು ಪಕ್ಷದ ಹಿರಿಯ ಶಾಸಕರಾಗಿರುವ ಹಿನ್ನೆಲೆ ಕ್ಯಾಬಿನೆಟ್‌ನಲ್ಲಿ ಅವಕಾಶ ದೊರೆಯಲಿದೆ ಎಂಬ ನಿರೀಕ್ಷೆ ವ್ಯಕ್ತಪಡಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆ ಕುರಿತಾಗಿ ನಡೆಯುತ್ತಿರುವ ಚರ್ಚೆಗಳ ಬಗ್ಗೆ ಪ್ರತಿಕ್ರಿಯಿಸಿದ ಅವರು, ಈ ವಿಷಯದ ಬಗ್ಗೆ ತಮಗೆ ಮಾಧ್ಯಮಗಳ ಮೂಲಕವೇ ಮಾಹಿತಿ ಲಭ್ಯವಾಗಿದೆ ಎಂದು ಹೇಳಿದರು.

“ಸಿದ್ದರಾಮಯ್ಯ ಅವರು ಎಷ್ಟು ವರ್ಷ ಮುಖ್ಯಮಂತ್ರಿಯಾಗಿರುತ್ತಾರೋ ಅಷ್ಟು ವರ್ಷ ಮುಂದುವರಿಯಲಿ. ಅದಕ್ಕೆ ನಮ್ಮ ಯಾವುದೇ ಅಭ್ಯಂತರವಿಲ್ಲ. ಆದರೆ ಸಿದ್ದರಾಮಯ್ಯ ಅವರ ಬಳಿಕ ರಾಜ್ಯ ಕಾಂಗ್ರೆಸ್‌ನ ಮುಂದಿನ ನಾಯಕ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಬೇಕು ಎಂಬುದು ನಮ್ಮ ಅಭಿಪ್ರಾಯ,” ಎಂದು ಅವರು ಸ್ಪಷ್ಟಪಡಿಸಿದರು.

ರಾಜ್ಯ ರಾಜಕೀಯದಲ್ಲಿ ಸದ್ಯ ಉತ್ತಮ ವಾತಾವರಣ ನಿರ್ಮಾಣವಾಗುತ್ತಿದೆ. ಹೈಕಮಾಂಡ್ ನಾಯಕರು ಕೂಡ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ವಿಶ್ವಾಸಕ್ಕೆ ತೆಗೆದುಕೊಂಡೇ ಚರ್ಚೆ ನಡೆಸಿದ್ದಾರೆ ಎಂದು ಬಾಲಕೃಷ್ಣ ತಿಳಿಸಿದರು.

2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ಡಿ.ಕೆ. ಶಿವಕುಮಾರ್ ಅವರ ಪಾತ್ರ ಮಹತ್ವದ್ದಾಗಿತ್ತು ಎಂದು ಅವರು ಹೇಳಿದರು. ಪಕ್ಷದ ಪರವಾಗಿ ಡಿಕೆಶಿ ಅನೇಕ ಬಾರಿ ತಮ್ಮ ನಿಷ್ಠೆಯನ್ನು ಸಾಬೀತುಪಡಿಸಿದ್ದಾರೆ. ಅವರು ಪಕ್ಷದ ಶಿಸ್ತಿನ ಸಿಪಾಯಿ ಎಂದು ಬಾಲಕೃಷ್ಣ ಪ್ರಶಂಸೆ ವ್ಯಕ್ತಪಡಿಸಿದರು.

ರಾಜ್ಯ ಕಾಂಗ್ರೆಸ್‌ನಲ್ಲಿ ಎಲ್ಲ ಸಮುದಾಯಗಳ ನಾಯಕರಿಗೂ ಅವಕಾಶವಿದ್ದು, ಮುಂದಿನ ದಿನಗಳಲ್ಲಿ ಉಪಮುಖ್ಯಮಂತ್ರಿ ಅಥವಾ ನಾಯಕತ್ವದ ಬಗ್ಗೆ ಅಂತಿಮ ತೀರ್ಮಾನವನ್ನು ಹೈಕಮಾಂಡ್ ತೆಗೆದುಕೊಳ್ಳಲಿದೆ ಎಂದು ಅವರು ಹೇಳಿದರು.

ಕಣ್ಣೀರಿನ ನಡುವೆ ಹಂಪಿಗೆ ವಿದಾಯ ಹೇಳಿದ ‘ಲಕ್ಷ್ಮೀ’: ತಡರಾತ್ರಿ ಕೊನೆಗೂ ಕೋಲಾರಕ್ಕೆ ಸ್ಥಳಾಂತರ

0

ಬಳ್ಳಾರಿ: ಹಂಪಿಯ ವಿರೂಪಾಕ್ಷ ದೇವಸ್ಥಾನದ ಆನೆ ‘ಲಕ್ಷ್ಮೀ’ ಕೊನೆಗೂ ಹಂಪಿಗೆ ವಿದಾಯ ಹೇಳಿದೆ. ಸ್ಥಳೀಯರ ತೀವ್ರ ವಿರೋಧ, ಸಾಮಾಜಿಕ ಜಾಲತಾಣಗಳ ಆಕ್ರೋಶ ಹಾಗೂ ಭಾವನಾತ್ಮಕ ಪ್ರತಿಭಟನೆಗಳ ನಡುವೆಯೂ ತಡರಾತ್ರಿ ರಹಸ್ಯ ಕಾರ್ಯಾಚರಣೆ ಮೂಲಕ ಆನೆಯನ್ನು ಕೋಲಾರಕ್ಕೆ ಸ್ಥಳಾಂತರಿಸಲಾಗಿದೆ.

ಮುಜರಾಯಿ ಇಲಾಖೆ ಮತ್ತು ವಿಜಯನಗರ ಜಿಲ್ಲಾಡಳಿತ ಸಂಯುಕ್ತವಾಗಿ ಈ ಕಾರ್ಯಾಚರಣೆ ನಡೆಸಿದ್ದು, ರಾತ್ರಿ 1 ಗಂಟೆಯ ನಂತರ ಯಾವುದೇ ಗೊಂದಲ ಸೃಷ್ಟಿಯಾಗದಂತೆ ಅತ್ಯಂತ ಗೌಪ್ಯವಾಗಿ ಆನೆಯನ್ನು ಲಾರಿಗೆ ಹತ್ತಿಸಿ ಕರೆದೊಯ್ಯಲಾಗಿದೆ.

ಈ ವೇಳೆ ವರ್ಷಗಳಿಂದ ಲಕ್ಷ್ಮಿಯನ್ನು ಸಾಕಿ ಬೆಳೆಸಿದ್ದ ಮಾವುತರ ಕುಟುಂಬ ಭಾವುಕರಾಯಿತು. ಆನೆಯನ್ನು ಅಪ್ಪಿಕೊಂಡು ಕುಟುಂಬಸ್ಥರು ಬಿಕ್ಕಿ ಬಿಕ್ಕಿ ಅತ್ತ ದೃಶ್ಯ ಅಲ್ಲಿದ್ದವರ ಮನಕಲಕಿತು. ಸ್ಥಳೀಯರು ಸಹ ಆಡಳಿತದ ಕ್ರಮದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.

ಆದರೆ ಅಧಿಕಾರಿಗಳ ಪ್ರಕಾರ, ಲಕ್ಷ್ಮಿಯ ಆರೋಗ್ಯ ಸ್ಥಿತಿ ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಳ್ಳಲಾಗಿದೆ. ಹೆಚ್ಚಿನ ವೈದ್ಯಕೀಯ ಚಿಕಿತ್ಸೆ ಮತ್ತು ಆರೈಕೆಗೆ ಅನುಕೂಲವಾಗುವಂತೆ ಕೋಲಾರಕ್ಕೆ ಶಿಫ್ಟ್ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಹಂಪಿಯ ಜನರೊಂದಿಗೆ ಭಾವನಾತ್ಮಕ ನಂಟು ಹೊಂದಿದ್ದ ‘ಲಕ್ಷ್ಮೀ’ಯ ಸ್ಥಳಾಂತರ ಇದೀಗ ರಾಜ್ಯಾದ್ಯಂತ ದೊಡ್ಡ ಚರ್ಚೆಗೆ ಕಾರಣವಾಗಿದೆ.

ಉಪೇಂದ್ರ ಫ್ಯಾಮಿಲಿ ಫೋಟೋ ವೈರಲ್: ನಿರಂಜನ್ ನಿಶ್ಚಿತಾರ್ಥದಲ್ಲಿ ಎಲ್ಲರ ಗಮನ ಸೆಳೆದ ಐಶ್ವರ್ಯಾ, ಆಯುಷ್!

ಯುವ ನಟ ನಿರಂಜನ್ ಸುಧೀಂದ್ರ ಅವರ ನಿಶ್ಚಿತಾರ್ಥ ಸಮಾರಂಭ ಇದೀಗ ಸೋಶಿಯಲ್ ಮೀಡಿಯಾದಲ್ಲಿ ಭಾರೀ ಸದ್ದು ಮಾಡುತ್ತಿದೆ. ರಿಯಲ್ ಸ್ಟಾರ್ ಉಪೇಂದ್ರ ಅವರ ಕುಟುಂಬ ಈ ಸಂಭ್ರಮದಲ್ಲಿ ಭಾಗಿಯಾಗಿದ್ದು, ಕುಟುಂಬದ ಅಪರೂಪದ ಫೋಟೋಗಳು ವೈರಲ್ ಆಗಿವೆ.

ಉಪೇಂದ್ರ, ಪ್ರಿಯಾಂಕಾ ಉಪೇಂದ್ರ, ಪುತ್ರ ಆಯುಷ್ ಹಾಗೂ ಪುತ್ರಿ ಐಶ್ವರ್ಯಾ ಎಲ್ಲರೂ ಸಾಂಪ್ರದಾಯಿಕ ಉಡುಪಿನಲ್ಲಿ ಮಿಂಚಿದ್ದು, ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿದ್ದರು. ವಿಶೇಷವಾಗಿ ಆಯುಷ್ ಲುಕ್ ಮತ್ತು ಸ್ಟೈಲ್ ಅಭಿಮಾನಿಗಳ ಗಮನ ಸೆಳೆದಿದೆ.

ನಿರಂಜನ್ ಸುಧೀಂದ್ರ ಅವರ ನಿಶ್ಚಿತಾರ್ಥ ಸಮಾರಂಭ ಅದ್ಧೂರಿಯಾಗಿ ನಡೆದಿದ್ದು, ಕುಟುಂಬಸ್ಥರು ಹಾಗೂ ಸಿನಿ ಗಣ್ಯರು ಪಾಲ್ಗೊಂಡು ಶುಭ ಹಾರೈಸಿದರು. ಈ ವೇಳೆ ಉಪೇಂದ್ರ ಕುಟುಂಬ ಒಟ್ಟಾಗಿ ಪೋಸ್ ನೀಡಿದ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ಉಪೇಂದ್ರ ಪುತ್ರ ಆಯುಷ್ ಈಗಾಗಲೇ ಚಿತ್ರರಂಗದತ್ತ ಆಸಕ್ತಿ ತೋರಿಸುತ್ತಿದ್ದು, ಸೋಶಿಯಲ್ ಮೀಡಿಯಾದಲ್ಲೂ ಸಕ್ರಿಯರಾಗಿದ್ದಾರೆ. ಇನ್ನು ಐಶ್ವರ್ಯಾ ಬಾಲನಟಿಯಾಗಿ ಗುರುತಿಸಿಕೊಂಡಿದ್ದು, ಸದ್ಯ ವಿದ್ಯಾಭ್ಯಾಸದಲ್ಲಿ ತೊಡಗಿಸಿಕೊಂಡಿದ್ದಾರೆ.

ಒಟ್ಟಾರೆ, ಉಪ್ಪಿ ಕುಟುಂಬದ ಈ ಸಂಭ್ರಮದ ಕ್ಷಣ ಅಭಿಮಾನಿಗಳಲ್ಲಿ ಭಾರೀ ಕುತೂಹಲ ಮತ್ತು ಸಂತಸ ಮೂಡಿಸಿದೆ.

error: Content is protected !!