Home Blog

ನಾಗರ ಹಾವು ತಪ್ಪಿಸಲು ಯತ್ನ: ಬಸ್-ಬೈಕ್ ಸರಣಿ ಅಪಘಾತ, ತೋಟಕ್ಕೆ ನುಗ್ಗಿದ ಬಸ್!

ಚಿಕ್ಕಮಗಳೂರು: ರಸ್ತೆಗೆ ಏಕಾಏಕಿ ಅಡ್ಡ ಬಂದ ನಾಗರ ಹಾವನ್ನು ತಪ್ಪಿಸಲು ಯತ್ನಿಸಿದ ಬೈಕ್ ಸವಾರನ ಎಡವಟ್ಟಿನಿಂದ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಬೈಕ್ ನಡುವೆ ಸರಣಿ ಅಪಘಾತ ಸಂಭವಿಸಿದ ಘಟನೆ ಜಿಲ್ಲೆಯ ಅಜ್ಜಂಪುರ ತಾಲೂಕಿನಲ್ಲಿ ನಡೆದಿದೆ.

ಅಪಘಾತದ ಪರಿಣಾಮ ನಿಯಂತ್ರಣ ತಪ್ಪಿದ ಬಸ್ ರಸ್ತೆ ಬದಿಯ ತೋಟಕ್ಕೆ ನುಗ್ಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ನಾರಾಯಣಪುರ ಗೇಟ್ ರಸ್ತೆಯಲ್ಲಿ ಬೈಕ್‌ನಲ್ಲಿ ತೆರಳುತ್ತಿದ್ದ ಇಬ್ಬರು ಸವಾರರ ಮುಂದೆ ಬೃಹತ್ ಗಾತ್ರದ ನಾಗರ ಹಾವೊಂದು ಏಕಾಏಕಿ ರಸ್ತೆ ದಾಟಲು ಮುಂದಾಗಿದೆ. ಹಾವನ್ನು ಕಂಡು ಆತಂಕಗೊಂಡ ಬೈಕ್ ಚಾಲಕ ತಕ್ಷಣವೇ ರಸ್ತೆ ಮಧ್ಯದಲ್ಲೇ ಬ್ರೇಕ್ ಹಾಕಿದ್ದಾನೆ. ಈ ವೇಳೆ ಬೈಕ್‌ನ ಹಿಂಬದಿಯಲ್ಲೇ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಚಾಲಕನಿಗೆ ವಾಹನ ನಿಯಂತ್ರಿಸಲು ಸಾಧ್ಯವಾಗದೆ ಬೈಕ್‌ಗೆ ಡಿಕ್ಕಿ ಹೊಡೆದಿದ್ದಾನೆ.

ಬೈಕ್‌ಗೆ ಗುದ್ದಿದ ಬಳಿಕ ಬಸ್ ಚಾಲಕ ಬ್ರೇಕ್ ಹಾಕಿ ವಾಹನವನ್ನು ನಿಯಂತ್ರಿಸಲು ಪ್ರಯತ್ನಿಸಿದರೂ, ಬಸ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ತೋಟದ ಬೇಲಿಯನ್ನು ಮುರಿದು ಒಳನುಗ್ಗಿದೆ. ಅಪಘಾತದ ವೇಳೆ ಬಸ್‌ನಲ್ಲಿ ಹಲವಾರು ಪ್ರಯಾಣಿಕರಿದ್ದರೂ, ಚಾಲಕನ ಸಮಯಪ್ರಜ್ಞೆಯಿಂದ ಭಾರಿ ದುರಂತ ತಪ್ಪಿದೆ. ಬಸ್ ತೋಟಕ್ಕೆ ನುಗ್ಗುತ್ತಿದ್ದಂತೆಯೇ ಪ್ರಯಾಣಿಕರು ಆತಂಕಗೊಂಡು ಕಿರುಚಾಡಿದ ಘಟನೆ ನಡೆದಿದೆ.

ಅಪಘಾತದಲ್ಲಿ ಬೈಕ್‌ನಲ್ಲಿದ್ದ ಇಬ್ಬರು ಸವಾರರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಮಾಹಿತಿ ತಿಳಿದ ಅಜ್ಜಂಪುರ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ. ನಾಗರ ಹಾವನ್ನು ತಪ್ಪಿಸಲು ಮಾಡಿದ ಯತ್ನವೇ ಈ ಅಪಘಾತಕ್ಕೆ ಕಾರಣವಾಗಿರುವುದು ಸ್ಥಳೀಯರಲ್ಲಿ ಚರ್ಚೆಗೆ ಗ್ರಾಸವಾಗಿದೆ.

ಚಹಾ ಪ್ರಿಯರೇ ಗಮನಿಸಿ: ಈ ತಪ್ಪುಗಳು ಗ್ಯಾಸ್‌ ಸಮಸ್ಯೆ ಹೆಚ್ಚಿಸಬಹುದು!

0

ಬೆಳಗ್ಗೆ ಎದ್ದ ತಕ್ಷಣ ಒಂದು ಕಪ್‌ ಬಿಸಿ ಬಿಸಿ ಚಹಾ ಕುಡಿಯುವುದು ಅನೇಕ ಜನರ ದಿನಚರಿಯ ಭಾಗವಾಗಿದೆ.

ಆದರೆ ಇತ್ತೀಚಿನ ದಿನಗಳಲ್ಲಿ ಹಾಲು ಹಾಕಿದ ಚಹಾ ಸೇವನೆಯ ಬಳಿಕ ಗ್ಯಾಸ್‌, ಹೊಟ್ಟೆ ಉಬ್ಬರ, ಎದೆ ಉರಿ, ಹುಳಿ ತೇಗು ಹಾಗೂ ಅಜೀರ್ಣದಂತಹ ಸಮಸ್ಯೆಗಳು ಹೆಚ್ಚಾಗಿ ಕಂಡುಬರುತ್ತಿವೆ. ಕೆಲವರು ಚಹಾ ಕುಡಿದ ಕೆಲವೇ ನಿಮಿಷಗಳಲ್ಲಿ ಅಸ್ವಸ್ಥತೆಯನ್ನು ಅನುಭವಿಸುತ್ತಿದ್ದು, ಇದರ ಹಿಂದಿರುವ ಕಾರಣಗಳ ಬಗ್ಗೆ ಆರೋಗ್ಯ ತಜ್ಞರು ಮಹತ್ವದ ಮಾಹಿತಿ ನೀಡಿದ್ದಾರೆ.

ತಜ್ಞರ ಪ್ರಕಾರ, ಹಾಲಿನಲ್ಲಿರುವ ಲ್ಯಾಕ್ಟೋಸ್‌ ಎಂಬ ಸಕ್ಕರೆ ಅಂಶವನ್ನು ಜೀರ್ಣಿಸಿಕೊಳ್ಳಲು ದೇಹದಲ್ಲಿ ಲ್ಯಾಕ್ಟೇಸ್‌ ಎಂಬ ಎನ್ಜೈಮ್‌ ಅಗತ್ಯವಿರುತ್ತದೆ. ಕೆಲವರಲ್ಲಿ ಈ ಎನ್ಜೈಮ್‌ ಪ್ರಮಾಣ ಕಡಿಮೆ ಇರುವುದರಿಂದ ಹಾಲು ಸರಿಯಾಗಿ ಜೀರ್ಣವಾಗುವುದಿಲ್ಲ. ಇದನ್ನು ಲ್ಯಾಕ್ಟೋಸ್‌ ಇಂಟಾಲರೆನ್ಸ್‌ ಎಂದು ಕರೆಯಲಾಗುತ್ತದೆ. ಇಂತಹವರಲ್ಲಿ ಹಾಲು ಸೇರಿಸಿದ ಚಹಾ ಸೇವಿಸಿದ ನಂತರ ಹೊಟ್ಟೆ ಉಬ್ಬರ, ಗ್ಯಾಸ್‌, ಹೊಟ್ಟೆ ನೋವು, ಅಜೀರ್ಣ ಹಾಗೂ ಕೆಲವೊಮ್ಮೆ ಅತಿಸಾರದಂತಹ ಸಮಸ್ಯೆಗಳು ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚಿರುತ್ತದೆ.

ಇದರ ಜೊತೆಗೆ ಚಹಾದಲ್ಲಿರುವ ಕ್ಯಾಫಿನ್‌ ಅಂಶವೂ ಅಸಿಡಿಟಿಗೆ ಪ್ರಮುಖ ಕಾರಣವಾಗಬಹುದು. ವಿಶೇಷವಾಗಿ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಚಹಾ ಕುಡಿಯುವ ಅಭ್ಯಾಸವಿರುವವರಲ್ಲಿ ಹೊಟ್ಟೆಯೊಳಗಿನ ಆಮ್ಲದ ಉತ್ಪತ್ತಿ ಹೆಚ್ಚಾಗುತ್ತದೆ. ಇದರಿಂದ ಎದೆ ಉರಿ, ಹುಳಿ ತೇಗು, ಆಸಿಡ್‌ ರಿಫ್ಲಕ್ಸ್‌ ಹಾಗೂ ಹೊಟ್ಟೆಯಲ್ಲಿ ಅಸ್ವಸ್ಥತೆ ಉಂಟಾಗಬಹುದು. ದಿನವಿಡೀ ಹಲವು ಬಾರಿ ಚಹಾ ಸೇವಿಸುವವರಲ್ಲಿ ಈ ಸಮಸ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ವೈದ್ಯರು ಎಚ್ಚರಿಕೆ ನೀಡಿದ್ದಾರೆ.

ಚಹಾ ಕುಡಿಯುವ ಸಮಯವೂ ಮುಖ್ಯ

ಚಹಾ ಸೇವನೆಯ ಸಮಯ ಆರೋಗ್ಯದ ಮೇಲೆ ನೇರ ಪರಿಣಾಮ ಬೀರುತ್ತದೆ. ಬೆಳಿಗ್ಗೆ ಆಹಾರ ಸೇವಿಸದೇ ಗಟ್ಟಿಯಾದ ಹಾಲಿನ ಚಹಾ ಕುಡಿಯುವುದು ಜೀರ್ಣಾಂಗದ ಮೇಲೆ ಒತ್ತಡ ಉಂಟುಮಾಡಬಹುದು. ಅದೇ ರೀತಿ ಸಂಜೆ ಅಥವಾ ರಾತ್ರಿ ತಡವಾಗಿ ಚಹಾ ಕುಡಿಯುವುದರಿಂದ ಅಜೀರ್ಣದ ಜೊತೆಗೆ ನಿದ್ರೆಯ ಮೇಲೆಯೂ ಪರಿಣಾಮ ಬೀಳಬಹುದು. ಆದ್ದರಿಂದ ಚಹಾವನ್ನು ಮಿತ ಪ್ರಮಾಣದಲ್ಲಿ ಹಾಗೂ ಸರಿಯಾದ ಸಮಯದಲ್ಲಿ ಸೇವಿಸುವುದು ಉತ್ತಮ ಎಂದು ತಜ್ಞರು ಸಲಹೆ ನೀಡಿದ್ದಾರೆ.

ಇತರ ಕಾರಣಗಳೂ ಅಸಿಡಿಟಿಗೆ ಕಾರಣ

ಅಸಿಡಿಟಿ ಮತ್ತು ಗ್ಯಾಸ್‌ ಸಮಸ್ಯೆಗೆ ಕೇವಲ ಚಹಾ ಮಾತ್ರ ಕಾರಣವಲ್ಲ. ಅತಿಯಾದ ಎಣ್ಣೆಯುಕ್ತ ಆಹಾರ, ಜಂಕ್‌ ಫುಡ್‌, ಮೈದಾ ಪದಾರ್ಥಗಳ ಸೇವನೆ, ಅಸಮರ್ಪಕ ಆಹಾರ ಪದ್ಧತಿ ಹಾಗೂ ದೈಹಿಕ ಚಟುವಟಿಕೆಯ ಕೊರತೆ ಕೂಡ ಪ್ರಮುಖ ಕಾರಣಗಳಾಗಿವೆ. ವ್ಯಾಯಾಮವಿಲ್ಲದ ಜೀವನಶೈಲಿಯಿಂದ ಮೆಟಾಬಾಲಿಸಂ ನಿಧಾನಗೊಳ್ಳುವುದರಿಂದ ಜೀರ್ಣಕ್ರಿಯೆ ದುರ್ಬಲವಾಗಿ ಅಸಿಡಿಟಿ ಸಮಸ್ಯೆ ಹೆಚ್ಚಾಗಬಹುದು.

ಸಮಸ್ಯೆ ತಪ್ಪಿಸಲು ಏನು ಮಾಡಬೇಕು?

ಆರೋಗ್ಯ ತಜ್ಞರ ಸಲಹೆಯಂತೆ ಖಾಲಿ ಹೊಟ್ಟೆಯಲ್ಲಿ ಚಹಾ ಕುಡಿಯುವುದನ್ನು ತಪ್ಪಿಸಬೇಕು. ದಿನಕ್ಕೆ ಎರಡು ಅಥವಾ ಮೂರು ಕಪ್‌ಗಿಂತ ಹೆಚ್ಚು ಚಹಾ ಸೇವಿಸಬಾರದು. ಚಹಾ ಕುಡಿಯುವಾಗ ಬಿಸ್ಕತ್‌, ಹಣ್ಣು ಅಥವಾ ಹಗುರವಾದ ಆಹಾರವನ್ನು ಜೊತೆಯಲ್ಲಿ ಸೇವಿಸುವುದು ಉತ್ತಮ. ದಿನವಿಡೀ ಸಾಕಷ್ಟು ನೀರು ಕುಡಿಯುವುದು, ಜಂಕ್‌ ಫುಡ್‌ ಹಾಗೂ ಎಣ್ಣೆ ಪದಾರ್ಥಗಳ ಸೇವನೆಯನ್ನು ಕಡಿಮೆ ಮಾಡುವುದು, ನಿಯಮಿತವಾಗಿ ಕನಿಷ್ಠ 30 ನಿಮಿಷಗಳ ಕಾಲ ವಾಕಿಂಗ್‌ ಅಥವಾ ವ್ಯಾಯಾಮ ಮಾಡುವುದು ಮತ್ತು ಸಮರ್ಪಕ ನಿದ್ರೆ ಪಡೆಯುವುದು ಜೀರ್ಣಕ್ರಿಯೆ ಸುಧಾರಿಸಲು ಸಹಕಾರಿಯಾಗುತ್ತದೆ.

ಒಟ್ಟಾರೆಯಾಗಿ, ಹಾಲಿನ ಚಹಾ ಎಲ್ಲರಿಗೂ ಸಮಸ್ಯೆ ಉಂಟುಮಾಡುವುದಿಲ್ಲ. ಆದರೆ ಚಹಾ ಸೇವಿಸಿದ ಬಳಿಕ ಪದೇಪದೇ ಗ್ಯಾಸ್‌, ಅಸಿಡಿಟಿ ಅಥವಾ ಅಜೀರ್ಣ ಸಮಸ್ಯೆಗಳು ಕಾಣಿಸಿಕೊಳ್ಳುತ್ತಿದ್ದರೆ ಆಹಾರ ಪದ್ಧತಿ ಮತ್ತು ಜೀವನಶೈಲಿಯಲ್ಲಿ ಬದಲಾವಣೆ ಮಾಡುವುದು ಅಗತ್ಯ. ಸಮಸ್ಯೆ ನಿರಂತರವಾಗಿ ಮುಂದುವರಿದರೆ ವೈದ್ಯರ ಸಲಹೆ ಪಡೆಯುವುದು ಉತ್ತಮ ಎಂದು ತಜ್ಞರು ಸೂಚಿಸಿದ್ದಾರೆ.

ನಾನು ಜನರ ಏಜೆಂಟ್, ಮಾಫಿಯಾದ ಕಮಿಷನ್ ಏಜೆಂಟ್ ಅಲ್ಲ: ಡಿ.ಕೆ. ಶಿವಕುಮಾರ್ʼಗೆ ಅಶೋಕ್ ತಿರುಗೇಟು

ಬೆಂಗಳೂರು: ತಮ್ಮನ್ನು ‘ಕಸದ ಮಾಫಿಯಾ ಏಜೆಂಟ್’ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಟೀಕಿಸಿರುವುದಕ್ಕೆ ವಿಪಕ್ಷ ನಾಯಕ ಆರ್. ಅಶೋಕ್ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದು, ತಾವು ಜನರ ಪರವಾಗಿ ಧ್ವನಿಯೆತ್ತುವ ಏಜೆಂಟ್ ಹೊರತು ಯಾವುದೇ ಮಾಫಿಯಾದ ಕಮಿಷನ್ ಏಜೆಂಟ್ ಅಲ್ಲ ಎಂದು ತಿರುಗೇಟು ನೀಡಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅಶೋಕ್, “ಕರ್ನಾಟಕದ ಏಳೂವರೆ ಕೋಟಿ ಕನ್ನಡಿಗರ ಹಕ್ಕುಗಳಿಗಾಗಿ ಮತ್ತು ಬೆಂಗಳೂರಿನ ಒಂದೂವರೆ ಕೋಟಿ ನಾಗರಿಕರ ಪರವಾಗಿ ಧ್ವನಿಯಾಗಿರುವ ಜನತಾ ಏಜೆಂಟ್ ನಾನು. ವಿಪಕ್ಷ ನಾಯಕನಾಗಿ ಸರ್ಕಾರದ ಕಾರ್ಯವೈಖರಿ ಮತ್ತು ಅಕ್ರಮಗಳನ್ನು ಪ್ರಶ್ನಿಸುವುದು ನನ್ನ ಸಂವಿಧಾನಬದ್ಧ ಕರ್ತವ್ಯ. ಅದಕ್ಕೆ ಯಾರ ಅನುಮತಿಯೂ ಅಗತ್ಯವಿಲ್ಲ” ಎಂದು ಹೇಳಿದ್ದಾರೆ.

ಮುಖ್ಯಮಂತ್ರಿಯವರ ಹೇಳಿಕೆಯನ್ನು ಟೀಕಿಸಿರುವ ಅವರು, ಮುಖ್ಯಮಂತ್ರಿ ಸ್ಥಾನ ಪಡೆಯಲು ನಡೆಸಿದ ರಾಜಕೀಯ ಪ್ರಯತ್ನಗಳನ್ನು ಉಲ್ಲೇಖಿಸಿ ವ್ಯಂಗ್ಯವಾಡಿದ್ದಾರೆ. ಜೊತೆಗೆ, ವಿಪಕ್ಷಗಳು ಸರ್ಕಾರಕ್ಕೆ ಯಾವುದೇ ‘ಹನಿಮೂನ್ ಪೀರಿಯಡ್’ ನೀಡುತ್ತಿಲ್ಲ ಎಂಬ ಅಸಮಾಧಾನ ಆಡಳಿತ ಪಕ್ಷದಲ್ಲಿದೆ ಎಂದು ಆರೋಪಿಸಿದ್ದಾರೆ.

ಕಾಂಗ್ರೆಸ್ ಪಕ್ಷದೊಳಗಿನ ಅಸಮಾಧಾನವನ್ನೂ ಪ್ರಸ್ತಾಪಿಸಿದ ಅಶೋಕ್, “ನಿಮ್ಮದೇ ಪಕ್ಷದ ಶಾಸಕರು ನಿರಂತರವಾಗಿ ಅಸಮಾಧಾನ ವ್ಯಕ್ತಪಡಿಸುತ್ತಿದ್ದು, ದೆಹಲಿಗೆ ತೆರಳಿ ನಾಯಕತ್ವದ ವಿರುದ್ಧ ದೂರುಗಳನ್ನು ನೀಡುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ನಿಮ್ಮ ರಾಜಕೀಯ ಸಮಸ್ಯೆಗಳನ್ನು ಮರೆಮಾಚಲು ನನ್ನ ಮೇಲೆ ಆರೋಪ ಮಾಡಬೇಡಿ” ಎಂದು ಕಿಡಿಕಾರಿದ್ದಾರೆ.

ಕೊಲ್ಲೂರುಗೆ ಸಿಎಂ ವಿಜಯ್ ಆಗಮನ: 5 ಗಂಟೆಗಳ ಕಾಲ ಭಕ್ತರಿಗೆ ದರ್ಶನ ಬಂದ್

ಉಡುಪಿ: ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರ ಕೊಲ್ಲೂರು ಮೂಕಾಂಬಿಕೆ ದೇವಸ್ಥಾನ ಭೇಟಿ ಹಿನ್ನೆಲೆಯಲ್ಲಿ ಶುಕ್ರವಾರ ದೇವಸ್ಥಾನದಲ್ಲಿ ವಿಶೇಷ ಭದ್ರತಾ ವ್ಯವಸ್ಥೆ ಜಾರಿಗೊಳಿಸಲಾಗಿದ್ದು, ಭಕ್ತರ ದರ್ಶನಕ್ಕೆ ತಾತ್ಕಾಲಿಕ ನಿರ್ಬಂಧ ಹೇರಲಾಗಿದೆ.

ಮಧ್ಯಾಹ್ನ 12 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ದೇವಸ್ಥಾನದಲ್ಲಿ ಭಕ್ತರಿಗೆ ದರ್ಶನ ಅವಕಾಶ ಇರುವುದಿಲ್ಲ ಎಂದು ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ತಿಳಿಸಿದೆ. ಮುಖ್ಯಮಂತ್ರಿ ಭೇಟಿ ಹಿನ್ನೆಲೆಯಲ್ಲಿ ದೇವಸ್ಥಾನದ ಸುತ್ತಮುತ್ತ ಹಾಗೂ ಸಂಚಾರ ಮಾರ್ಗಗಳಲ್ಲಿ ಬಿಗಿ ಬಂದೋಬಸ್ತು ಕೈಗೊಳ್ಳಲಾಗಿದೆ.

ಪೊಲೀಸ್ ಇಲಾಖೆ ಸಾರ್ವಜನಿಕರಿಗೆ ಮತ್ತು ಭಕ್ತರಿಗೆ ಎಚ್ಚರಿಕೆ ನೀಡಿದ್ದು, ಕಾನ್ವಾಯ್ ಸಾಗುವ ಮಾರ್ಗಗಳಲ್ಲಿ ಅಥವಾ ದೇವಸ್ಥಾನದ ಪ್ರವೇಶ ದ್ವಾರ ಹಾಗೂ ಆವರಣದಲ್ಲಿ ಗುಂಪು ಸೇರದಂತೆ ಸೂಚಿಸಿದೆ. ಭದ್ರತಾ ಕಾರಣಗಳಿಂದ ಈ ಅವಧಿಯಲ್ಲಿ ಜನಸಂದಣಿ ತಪ್ಪಿಸುವುದು ಸೂಕ್ತ ಎಂದು ಮನವಿ ಮಾಡಿದೆ.

ವಿಜಯ್ ಅವರು ದೇವಿಯ ದರ್ಶನ ಪಡೆದು ನಿಗದಿತ ಕಾರ್ಯಕ್ರಮ ಮುಗಿಸಿದ ಬಳಿಕ ಹಿಂತಿರುಗಲಿದ್ದು, ಯಾವುದೇ ಸಾರ್ವಜನಿಕ ಭೇಟಿ ಅಥವಾ ಸಭೆ ಕಾರ್ಯಕ್ರಮ ಇರುವುದಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ಕರ್ನಾಟಕದಿಂದ ರಾಜ್ಯಸಭೆಗೆ ನಾಲ್ವರು ಅವಿರೋಧ ಆಯ್ಕೆ: ಕಾಂಗ್ರೆಸ್ʼಗೆ ಮೂರು, ಬಿಜೆಪಿಗೆ ಒಂದು ಸ್ಥಾನ

ಬೆಂಗಳೂರು: ಕರ್ನಾಟಕ ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಚುನಾವಣಾ ಕಣದಲ್ಲಿ ಯಾವುದೇ ಪ್ರತಿಸ್ಪರ್ಧಿಗಳು ಇಲ್ಲದ ಕಾರಣ ಎಲ್ಲಾ ನಾಲ್ಕು ಸ್ಥಾನಗಳಿಗೂ ಅವಿರೋಧ ಆಯ್ಕೆ ನಡೆದಿದೆ.

ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಾದ ಮಲ್ಲಿಕಾರ್ಜುನ ಖರ್ಗೆ, ಮನ್ಸೂರ್ ಅಲಿ ಖಾನ್ ಹಾಗೂ ಪವನ್ ಖೇರಾ ಮತ್ತು ಬಿಜೆಪಿ ಅಭ್ಯರ್ಥಿ ಎಂ. ನಾಗರಾಜು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಕುರಿತು ವಿಧಾನಸಭೆ ಕಾರ್ಯದರ್ಶಿ ಹಾಗೂ ಚುನಾವಣಾಧಿಕಾರಿ ಕೆ.ಎಂ. ವಿಶಾಲಾಕ್ಷಿ ಅಧಿಕೃತ ಘೋಷಣೆ ಮಾಡಿದ್ದಾರೆ.

ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾದ ಬಳಿಕ ಪ್ರತಿಕ್ರಿಯಿಸಿದ ಬಿಜೆಪಿ ಅಭ್ಯರ್ಥಿ ಎಂ. ನಾಗರಾಜು, ತಮ್ಮ ಆಯ್ಕೆಗೆ ಪಕ್ಷದ ಕೇಂದ್ರ ನಾಯಕತ್ವಕ್ಕೆ ಕೃತಜ್ಞತೆ ಸಲ್ಲಿಸಿದರು.

ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಪಕ್ಷದ ವರಿಷ್ಠರಿಗೆ ಧನ್ಯವಾದಗಳನ್ನು ಸಲ್ಲಿಸುತ್ತೇನೆ. ನಾನು ಸಾಮಾನ್ಯ ಕಾರ್ಯಕರ್ತನಾಗಿ ಪಕ್ಷದ ಸಂಘಟನೆಯಲ್ಲಿ ಕೆಲಸ ಮಾಡಿದ್ದೇನೆ. ನನಗೆ ನೀಡಿರುವ ಈ ಜವಾಬ್ದಾರಿಯನ್ನು ನಿರೀಕ್ಷೆಗಳಿಗೆ ತಕ್ಕಂತೆ ನಿರ್ವಹಿಸುತ್ತೇನೆ ಎಂದು ಹೇಳಿದರು.

ಇದೇ ವೇಳೆ ಕಾಂಗ್ರೆಸ್ ಅಭ್ಯರ್ಥಿ ಪವನ್ ಖೇರಾ ಕೂಡ ಸಂತಸ ವ್ಯಕ್ತಪಡಿಸಿದರು. ಕರ್ನಾಟಕದಿಂದ ರಾಜ್ಯಸಭೆ ಸದಸ್ಯನಾಗಿ ಆಯ್ಕೆಯಾಗಿರುವುದು ನನಗೆ ಹೆಮ್ಮೆಯ ವಿಷಯ. ಮುಂದಿನ ಬಾರಿ ಕರ್ನಾಟಕಕ್ಕೆ ಬಂದಾಗ ಕನ್ನಡ ಕಲಿತುಕೊಂಡು ಬರುತ್ತೇನೆ ಎಂದು ಹೇಳಿದರು.

ಸಾಲದ ಹಣ ವಾಪಸ್ ಕೊಡುವುದಾಗಿ ಕರೆಸಿಕೊಂಡು ವೃದ್ಧೆಯ ಹತ್ಯೆ! 25 ದಿನಗಳ ಬಳಿಕ ಆರೋಪಿಗಳು ಅರೆಸ್ಟ್

0

ಕೋಲಾರ: ಸಾಲವಾಗಿ ಪಡೆದಿದ್ದ ಹಣವನ್ನು ಹಿಂತಿರುಗಿಸುವುದಾಗಿ ಹೇಳಿ ಕರೆಸಿಕೊಂಡು ವೃದ್ಧೆಯೊಬ್ಬರನ್ನು ಹತ್ಯೆಗೈದಿರುವ ಘಟನೆ ಕೋಲಾರ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಘಟನೆ ನಡೆದ 25 ದಿನಗಳ ಬಳಿಕ ಆರೋಪಿಗಳು ಪೊಲೀಸರ ಬಲೆಗೆ ಬಿದ್ದಿದ್ದಾರೆ.

ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಲಕ್ಷ್ಮೀಪುರ ಗ್ರಾಮದ ರೆಡ್ಡಮ್ಮ (70) ಹತ್ಯೆಗೀಡಾದ ವೃದ್ಧೆ. ಇದೇ ಗ್ರಾಮದ ನಿವಾಸಿಗಳಾದ ತಿಮ್ಮರಾಜು ಹಾಗೂ ಮುನಿರಾಜು ಎಂಬುವರನ್ನು ಪ್ರಕರಣ ಸಂಬಂಧ ಪೊಲೀಸರು ಬಂಧಿಸಿದ್ದಾರೆ.

ಮೇ 17ರಂದು ರೆಡ್ಡಮ್ಮ ನಾಪತ್ತೆಯಾಗಿದ್ದರು. ಈ ಕುರಿತು ಕುಟುಂಬಸ್ಥರು ಹುಡುಕಾಟ ನಡೆಸಿದರೂ ಯಾವುದೇ ಸುಳಿವು ಸಿಕ್ಕಿರಲಿಲ್ಲ. ಬಳಿಕ ಜೂನ್ 1ರಂದು ನಾಪತ್ತೆ ಪ್ರಕರಣ ದಾಖಲಾಗಿತ್ತು. ತನಿಖೆ ವೇಳೆ ರೆಡ್ಡಮ್ಮ ಅವರ ಮಗನಿಗೆ ಸಾಲ ನೀಡಿದ್ದ ತಿಮ್ಮರಾಜು ಮತ್ತು ಮುನಿರಾಜು ಅವರ ಮೇಲೆ ಕುಟುಂಬಸ್ಥರು ಅನುಮಾನ ವ್ಯಕ್ತಪಡಿಸಿದ್ದರು.

ಈ ಹಿನ್ನೆಲೆಯಲ್ಲಿ ಇಬ್ಬರನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸಿದಾಗ, ಸಾಲದ ಹಣ ನೀಡುವುದಾಗಿ ಹೇಳಿ ರೆಡ್ಡಮ್ಮರನ್ನು ಕರೆಸಿಕೊಂಡು ಹತ್ಯೆ ಮಾಡಿರುವುದಾಗಿ ಆರೋಪಿಗಳು ಒಪ್ಪಿಕೊಂಡಿದ್ದಾರೆ ಎನ್ನಲಾಗಿದೆ. ಅಲ್ಲದೆ, ಹತ್ಯೆಯ ಬಳಿಕ ಮೃತದೇಹವನ್ನು ಚಿಕ್ಕಬಳ್ಳಾಪುರ ಜಿಲ್ಲೆಯ ಕೆಂಚಾರ್ಲಹಳ್ಳಿ ಅರಣ್ಯ ಪ್ರದೇಶದಲ್ಲಿ ಬಿಸಾಡಿರುವುದಾಗಿ ಮಾಹಿತಿ ನೀಡಿದ್ದಾರೆ.

ಆರೋಪಿಗಳ ಮಾಹಿತಿ ಆಧರಿಸಿ ಪೊಲೀಸರು ಅರಣ್ಯ ಪ್ರದೇಶದಲ್ಲಿ ಮೃತದೇಹವನ್ನು ಪತ್ತೆಹಚ್ಚಿದ್ದಾರೆ. ಸದ್ಯ ರಾಯಲಪಾಡು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಬಂಧಿತ ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.

ರಾಜ್ಯ ಸರ್ಕಾರದ ವೈಫಲ್ಯ ಮುಚ್ಚಿಹಾಕಲು ಕೇಂದ್ರದ ವಿರುದ್ಧ ಆರೋಪ: ಬಿ.ವೈ. ವಿಜಯೇಂದ್ರ ವಾಗ್ದಾಳಿ

ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರ್ಕಾರ ತನ್ನ ಆಡಳಿತ ವೈಫಲ್ಯಗಳನ್ನು ಮುಚ್ಚಿಹಾಕುವ ಉದ್ದೇಶದಿಂದ ಕೇಂದ್ರ ಸರ್ಕಾರದ ವಿರುದ್ಧ ನಿರಂತರವಾಗಿ ಮಲತಾಯಿ ಧೋರಣೆ ಮತ್ತು ಅನ್ಯಾಯದ ಆರೋಪಗಳನ್ನು ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಆರೋಪಿಸಿದ್ದಾರೆ.

ನಗರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ನಡೆದ ಸಂವಾದ ಕಾರ್ಯಕ್ರಮದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಕಳೆದ ಮೂರು ವರ್ಷಗಳಲ್ಲಿ ರಾಜ್ಯದಲ್ಲಿ ಯಾವುದೇ ಮಹತ್ವದ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ ಎಂದು ಟೀಕಿಸಿದರು.

ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗಾಗಿ ಮೀಸಲಿಟ್ಟ ಹಣವನ್ನು ಬೇರೆ ಉದ್ದೇಶಗಳಿಗೆ ಬಳಸಲಾಗಿದೆ ಎಂಬ ಆರೋಪಗಳೂ ಸಾರ್ವಜನಿಕ ವಲಯದಲ್ಲಿ ಚರ್ಚೆಯಾಗುತ್ತಿವೆ. ರಾಜ್ಯ ಸರ್ಕಾರ ಅಭಿವೃದ್ಧಿ ವಿಚಾರದಲ್ಲಿ ವಿಫಲವಾಗಿರುವುದನ್ನು ಮರೆಮಾಚಲು ಕೇಂದ್ರ ಸರ್ಕಾರದ ವಿರುದ್ಧ ಆರೋಪ ಮಾಡುವ ತಂತ್ರ ಅನುಸರಿಸುತ್ತಿದೆ ಎಂದು ವಿಜಯೇಂದ್ರ ವಾಗ್ದಾಳಿ ನಡೆಸಿದರು.

ಇದೇ ವೇಳೆ ಮಾಜಿ ಉಪಮುಖ್ಯಮಂತ್ರಿ ಹಾಗೂ ಸಂಸದ ಗೋವಿಂದ ಕಾರಜೋಳ ಮಾತನಾಡಿ, ಮನೆಮನೆಗೆ ಕುಡಿಯುವ ನೀರು ಪೂರೈಕೆ ಮಾಡುವ ಜವಾಬ್ದಾರಿ ರಾಜ್ಯ ಸರ್ಕಾರದ ಮೇಲಿದೆ ಎಂದು ಹೇಳಿದರು.

ಕೇಂದ್ರ ಸರ್ಕಾರ ಜಲಜೀವನ್ ಮಿಷನ್ ಯೋಜನೆಯಡಿ ಅಗತ್ಯ ಅನುದಾನವನ್ನು ಒದಗಿಸುತ್ತಿದ್ದು, ಆ ಹಣವನ್ನು ಸಮರ್ಪಕವಾಗಿ ಬಳಸಿಕೊಂಡು ಸುರಕ್ಷಿತ ಹಾಗೂ ಶುದ್ಧ ಕುಡಿಯುವ ನೀರನ್ನು ಪ್ರತಿಯೊಂದು ಮನೆಗೆ ತಲುಪಿಸುವುದು ರಾಜ್ಯ ಸರ್ಕಾರದ ಕರ್ತವ್ಯವಾಗಿದೆ ಎಂದು ತಿಳಿಸಿದರು.

ಸಿಎಂ ಆಗಲು ಅಧ್ಯಕ್ಷ ಸ್ಥಾನವೇ ಬೇಕಿಲ್ಲ, ಕೆಲಸ ಮಾಡಿದವರಿಗೆ ಫಲ ಸಿಗುತ್ತದೆ: ಸತೀಶ್ ಜಾರಕಿಹೊಳಿ

ಬೆಂಗಳೂರು: ಸರ್ಕಾರ ಸಮರ್ಪಕವಾಗಿ ಕಾರ್ಯನಿರ್ವಹಿಸಿ ಜನರ ನಿರೀಕ್ಷೆಗಳನ್ನು ಈಡೇರಿಸಲು ಸಮಯ ಬೇಕಾಗುತ್ತದೆ ಎಂದು ಸಚಿವ ಸತೀಶ್ ಜಾರಕಿಹೊಳಿ ಅಭಿಪ್ರಾಯಪಟ್ಟಿದ್ದಾರೆ. ಹೆಚ್ಚುವರಿ ಖಾತೆಗಾಗಿ ತಾವು ಬೇಡಿಕೆ ಇಟ್ಟಿದ್ದನ್ನು ಒಪ್ಪಿಕೊಂಡ ಅವರು, ಕ್ರೀಡಾ ಇಲಾಖೆ ಸಿಕ್ಕಿದ್ದರೆ ರಾಜ್ಯವನ್ನು ಕ್ರೀಡಾ ಕ್ಷೇತ್ರದಲ್ಲಿ ದೇಶದಲ್ಲೇ ಮುಂಚೂಣಿಗೆ ತರುವ ಪ್ರಯತ್ನ ಮಾಡುತ್ತಿದ್ದೆವು ಎಂದು ಹೇಳಿದ್ದಾರೆ.

ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸತೀಶ್ ಜಾರಕಿಹೊಳಿ, ತಾವು ಕ್ರೀಡಾ ಖಾತೆ ನೀಡುವಂತೆ ಮನವಿ ಮಾಡಿದ್ದೆ. ಆದರೆ ಆ ಖಾತೆಯನ್ನು ಬೇರೆ ಸಚಿವರಿಗೆ ಹಂಚಿಕೆ ಮಾಡಲಾಗಿದೆ. ಕ್ರೀಡಾ ಇಲಾಖೆ ದೊರೆತಿದ್ದರೆ ಹಲವು ಹೊಸ ಯೋಜನೆಗಳನ್ನು ಜಾರಿಗೊಳಿಸಿ ರಾಜ್ಯವನ್ನು ಕ್ರೀಡಾ ಕ್ಷೇತ್ರದಲ್ಲಿ ನಂಬರ್ ಒನ್ ಸ್ಥಾನಕ್ಕೆ ಕೊಂಡೊಯ್ಯುವ ಗುರಿ ಹೊಂದಿದ್ದೆವು ಎಂದು ತಿಳಿಸಿದರು.

ಹಿಂದೆ ಧರಂ ಸಿಂಗ್ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿಯೂ ಕ್ರೀಡಾ ಖಾತೆಗಾಗಿ ಮನವಿ ಮಾಡಿದ್ದೆ. ಈ ಬಾರಿ ಆ ಖಾತೆಯನ್ನು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರಿಗೆ ನೀಡಲಾಗಿದೆ. ಅವರಿಗೆ ಕ್ರೀಡೆ ಬಗ್ಗೆ ವಿಶೇಷ ಆಸಕ್ತಿ ಇರುವುದರಿಂದ ಖಾತೆ ಪಡೆದಿರಬಹುದು ಎಂದು ಹೇಳಿದರು.

ಸಿದ್ದರಾಮಯ್ಯ ಅವರ ವಿರುದ್ಧ ನಡೆದಿರುವ ಅಪಪ್ರಚಾರ ಹಾಗೂ ಯತೀಂದ್ರ ಸಿದ್ದರಾಮಯ್ಯ ಅವರ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಅವರು, ಸಾಮಾಜಿಕ ಜಾಲತಾಣಗಳ ಐಟಿ ಸೆಲ್ ಮೂಲಕ ಕೆಲವು ಅಪಪ್ರಚಾರಗಳು ನಡೆದಿವೆ. ಕಾಂಗ್ರೆಸ್ ಪಕ್ಷದ ಶಕ್ತಿ ಕುಗ್ಗಿಸುವ ಉದ್ದೇಶದಿಂದ ಇಂತಹ ಪ್ರಯತ್ನಗಳು ನಡೆದಿವೆ ಎಂದು ಆರೋಪಿಸಿದರು.

ಅಹಿಂದ ಸಮುದಾಯದ ಸಂಘಟನೆಯ ಬಗ್ಗೆ ಮಾತನಾಡಿದ ಅವರು, ಅಹಿಂದ ಶಕ್ತಿಯನ್ನು ಮತ್ತಷ್ಟು ಬಲಪಡಿಸುವ ಅಗತ್ಯವಿದೆ. ಈ ಕೆಲಸದಲ್ಲಿ ಹಲವರು ತೊಡಗಿಸಿಕೊಂಡಿದ್ದಾರೆ. ಯತೀಂದ್ರ ಸಿದ್ದರಾಮಯ್ಯ ಈ ವಿಚಾರವನ್ನು ಹಿಂದೆ ಕೂಡ ಪ್ರಸ್ತಾಪಿಸಿದ್ದರು, ಈಗಲೂ ಅದನ್ನೇ ಹೇಳಿದ್ದಾರೆ. ಇದರಿಂದ ಪಕ್ಷಕ್ಕೆ ಯಾವುದೇ ಹಾನಿಯಾಗಿಲ್ಲ ಎಂದು ಸ್ಪಷ್ಟಪಡಿಸಿದರು.

ಮುಖ್ಯಮಂತ್ರಿ ಹುದ್ದೆ ಕುರಿತ ಪ್ರಶ್ನೆಗೆ ಉತ್ತರಿಸಿದ ಸತೀಶ್ ಜಾರಕಿಹೊಳಿ, ಮುಖ್ಯಮಂತ್ರಿ ಆಗಲು ಪಕ್ಷದ ಅಧ್ಯಕ್ಷ ಸ್ಥಾನದಲ್ಲೇ ಇರಬೇಕೆಂಬ ನಿಯಮ ಇಲ್ಲ. ಪಕ್ಷಕ್ಕಾಗಿ ಕೆಲಸ ಮಾಡಿದವರಿಗೆ ಸೂಕ್ತ ಸಮಯದಲ್ಲಿ ಅವಕಾಶ ಮತ್ತು ಪ್ರತಿಫಲ ದೊರೆಯುತ್ತದೆ ಎಂದು ಹೇಳಿದರು.

ಶಿಗ್ಗಾಂವಿ ಹಾಗೂ ಬಾಗಲಕೋಟೆ ಕ್ಷೇತ್ರಗಳಲ್ಲಿ ಪಕ್ಷದ ಗೆಲುವಿನ ಉದಾಹರಣೆ ನೀಡಿದ ಅವರು, ಪಕ್ಷ ಸಂಘಟನೆಗೆ ಶ್ರಮಿಸಿದವರಿಗೆ ಫಲ ಸಿಗುವುದು ಸಹಜ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿ ಹುದ್ದೆ ಕುರಿತು ನೀಡಿರುವ ಹೇಳಿಕೆಯಲ್ಲಿ ತಪ್ಪೇನಿಲ್ಲ. ಪಕ್ಷವನ್ನು ಗೆಲುವಿನತ್ತ ಕೊಂಡೊಯ್ಯುವವರಿಗೆ ಸೂಕ್ತ ಮಾನ್ಯತೆ ಸಿಗುತ್ತದೆ ಎಂದು ಹೇಳಿದರು.

ಮುಂಗಾರು ಅಬ್ಬರಕ್ಕೆ ವಾಟರ್ ಸ್ಪೋರ್ಟ್ಸ್ ಸಂಪೂರ್ಣ ಬಂದ್: ಮಂಗಳೂರು ಬೀಚ್ʼಗಳಲ್ಲಿ ಹೈಅಲರ್ಟ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಮಳೆ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ಕರಾವಳಿ ಪ್ರದೇಶಗಳಲ್ಲಿ ಸಮುದ್ರದ ಅಲೆಗಳ ಅಬ್ಬರ ಹೆಚ್ಚಾಗಿದ್ದು, ಪ್ರವಾಸಿಗರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಜಿಲ್ಲಾಡಳಿತ ಮತ್ತು ಪ್ರವಾಸೋದ್ಯಮ ಇಲಾಖೆ ಮಹತ್ವದ ನಿರ್ಧಾರ ಕೈಗೊಂಡಿವೆ.

ಜಿಲ್ಲೆಯ ಎಲ್ಲಾ ಪ್ರಮುಖ ಬೀಚ್‌ಗಳಲ್ಲಿ ಹೈಅಲರ್ಟ್ ಘೋಷಿಸಲಾಗಿದ್ದು, ಸಮುದ್ರ ಆಧಾರಿತ ಮನರಂಜನಾ ಚಟುವಟಿಕೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಮಂಗಳೂರಿನ ಜನಪ್ರಿಯ ಪ್ರವಾಸಿ ತಾಣಗಳಾದ ಪಣಂಬೂರು, ತಣ್ಣೀರುಬಾವಿ, ಸೋಮೇಶ್ವರ ಸೇರಿದಂತೆ ಜಿಲ್ಲೆಯ ಎಲ್ಲ ಕಡಲತೀರಗಳಲ್ಲಿ ವಾಟರ್ ಸ್ಪೋರ್ಟ್ಸ್ ಚಟುವಟಿಕೆಗಳಿಗೆ ತಕ್ಷಣದಿಂದಲೇ ನಿರ್ಬಂಧ ಹೇರಲಾಗಿದೆ.

ಮುಂಗಾರು ಅವಧಿ ಮುಗಿಯುವವರೆಗೆ ಈ ನಿರ್ಬಂಧ ಮುಂದುವರಿಯಲಿದ್ದು, ಪ್ರವಾಸಿಗರ ನೆಚ್ಚಿನ ತೇಲುವ ಸೇತುವೆ, ಬೋಟಿಂಗ್, ಜೆಟ್ ಸ್ಕೀ, ಪ್ಯಾರಾಸೈಲಿಂಗ್ ಸೇರಿದಂತೆ ವಿವಿಧ ಸಾಹಸ ಕ್ರೀಡೆಗಳಿಗೂ ಅವಕಾಶ ಇರುವುದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಮುದ್ರದಲ್ಲಿ ಅಪಾಯಕಾರಿ ಪರಿಸ್ಥಿತಿ ನಿರ್ಮಾಣವಾಗಿರುವ ಕಾರಣ ಯಾವುದೇ ಅನಾಹುತ ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ಕಡಲತೀರದ ಹಲವು ಭಾಗಗಳಲ್ಲಿ ಸುರಕ್ಷತಾ ಹಗ್ಗಗಳನ್ನು ಅಳವಡಿಸಿ ಬ್ಯಾರಿಕೇಡ್‌ಗಳನ್ನು ನಿರ್ಮಿಸಲಾಗಿದ್ದು, ಪ್ರವಾಸಿಗರು ಸಮುದ್ರದ ನೀರಿಗೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

ನಿಯಮ ಉಲ್ಲಂಘಿಸಿ ಸಮುದ್ರಕ್ಕಿಳಿಯುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಡಳಿತ ಸ್ಪಷ್ಟಪಡಿಸಿದೆ. ಅಲ್ಲದೆ, ಬೀಚ್ ಪ್ರದೇಶಗಳಲ್ಲಿ ಲೈಫ್‌ಗಾರ್ಡ್ ಸಿಬ್ಬಂದಿ, ಕರಾವಳಿ ಕಾವಲುಪಡೆ ಹಾಗೂ ಸ್ಥಳೀಯ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, 24 ಗಂಟೆಗಳ ಕಾಲ ನಿಗಾವಹಿಸಲಾಗಿದೆ.

ಬೀಚ್ ಪ್ರವೇಶಕ್ಕೆ ಸಂಪೂರ್ಣ ನಿರ್ಬಂಧ ವಿಧಿಸಲಾಗಿಲ್ಲ. ಆದರೆ ಪ್ರವಾಸಿಗರು ಕಡಲಿಗೆ ಇಳಿಯದೆ ಸುರಕ್ಷಿತ ಪ್ರದೇಶಗಳಲ್ಲಿ ಉಳಿದುಕೊಂಡು ಮಾತ್ರ ಸಮುದ್ರದ ದೃಶ್ಯಾವಳಿಯನ್ನು ವೀಕ್ಷಿಸಬಹುದು. ಕರಾವಳಿ ಪ್ರದೇಶಗಳಿಗೆ ಭೇಟಿ ನೀಡುವ ಸಾರ್ವಜನಿಕರು ಹಾಗೂ ಪ್ರವಾಸಿಗರು ಸುರಕ್ಷತಾ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಿ ಅಧಿಕಾರಿಗಳೊಂದಿಗೆ ಸಹಕರಿಸುವಂತೆ ಜಿಲ್ಲಾಡಳಿತ ಮನವಿ ಮಾಡಿದೆ.

‘ವೀರಗಾಸೆ ಎಂದರೆ ಮಹದೇವಪ್ಪ’: ಮೇರು ಕಲಾವಿದನ ಅಗಲಿಕೆಗೆ ಚೆಲುವರಾಯಸ್ವಾಮಿ ಕಂಬನಿ

0

ಮಂಡ್ಯ: ವೀರಗಾಸೆ ಕಲೆಗೆ ಜೀವ ತುಂಬಿದ ಹಿರಿಯ ಜಾನಪದ ಕಲಾವಿದ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮಹದೇವಪ್ಪ ಅವರ ನಿಧನಕ್ಕೆ ಮಾಜಿ ಸಚಿವ ಚೆಲುವರಾಯಸ್ವಾಮಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ನಾಗಮಂಗಲ ತಾಲೂಕಿನ ಹಳ್ಳಿಯಿಂದ ಹೊರಹೊಮ್ಮಿ ರಾಜ್ಯ, ರಾಷ್ಟ್ರ ಹಾಗೂ ವಿದೇಶಗಳಲ್ಲಿ ಮಂಡ್ಯದ ಹೆಸರನ್ನು ಪಸರಿಸಿದ್ದ ಮಹದೇವಪ್ಪ, ವೀರಗಾಸೆ ಕಲೆಯ ಜೀವಂತ ಪ್ರತೀಕವಾಗಿದ್ದರು. “ವೀರಗಾಸೆ ಎಂದರೆ ಮಹದೇವಪ್ಪ, ಮಹದೇವಪ್ಪ ಎಂದರೆ ವೀರಗಾಸೆ” ಎಂಬ ಮಟ್ಟಿಗೆ ಅವರು ಜನಮನದಲ್ಲಿ ಸ್ಥಾನ ಪಡೆದಿದ್ದರು ಎಂದು ಚೆಲುವರಾಯಸ್ವಾಮಿ ಹೇಳಿದ್ದಾರೆ.

ಅತ್ಯಂತ ಸರಳ ಹಾಗೂ ಸಜ್ಜನಿಕೆಯ ವ್ಯಕ್ತಿತ್ವ ಹೊಂದಿದ್ದ ಮಹದೇವಪ್ಪ, ನೂರಾರು ಶಿಷ್ಯರನ್ನು ರೂಪಿಸಿ ಜಾನಪದ ಕಲೆಯ ಉಳಿವಿಗೆ ಶ್ರಮಿಸಿದ್ದರು. ಮೈಸೂರು ದಸರಾ, ಹಂಪಿ ಉತ್ಸವ ಸೇರಿದಂತೆ ಅನೇಕ ಪ್ರತಿಷ್ಠಿತ ವೇದಿಕೆಗಳಲ್ಲಿ ಅವರ ಕಲಾಪ್ರದರ್ಶನ ರಾಜ್ಯದ ಹೆಮ್ಮೆ ಹೆಚ್ಚಿಸಿತ್ತು.

ಇಂತಹ ಮೇರು ಕಲಾವಿದರ ಕುಟುಂಬಕ್ಕೆ ಸರ್ಕಾರ ಅಗತ್ಯ ನೆರವು ನೀಡಬೇಕು. ಅವರ ಹೆಸರಿನಲ್ಲಿ ಜಾನಪದ ಪ್ರಶಸ್ತಿ ಸ್ಥಾಪಿಸಿ, ಮುಂದಿನ ಪೀಳಿಗೆಗೆ ಅವರ ಸಾಧನೆಯನ್ನು ಪರಿಚಯಿಸುವ ಕೆಲಸವಾಗಬೇಕು ಎಂದು ಚೆಲುವರಾಯಸ್ವಾಮಿ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಮಹದೇವಪ್ಪ ಅವರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಅವರ ಕುಟುಂಬ, ಶಿಷ್ಯರು ಮತ್ತು ಅಪಾರ ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿ ದೊರಕಲಿ ಎಂದು ಅವರು ಪ್ರಾರ್ಥಿಸಿದ್ದಾರೆ.

error: Content is protected !!