ವಿಜಯಸಾಕ್ಷಿ ಸುದ್ದಿ, ನವಲಗುಂದ: ನವಲಗುಂದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಮನೆ ಕಳ್ಳತನ ಪ್ರಕರಣವನ್ನು ಪೊಲೀಸರು ಭೇದಿಸಿ ಮಹಿಳಾ ಆರೋಪಿತೆಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿತೆಯಿಂದ ₹4.70 ಲಕ್ಷ ಮೌಲ್ಯದ 42.79 ಗ್ರಾಂ ಬಂಗಾರದ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ.
ಬಳ್ಳೂರ ಗ್ರಾಮದ ಶೈಲಾ ಸಿದ್ದಯ್ಯ ಹಿರೇಮಠ ಅವರು ತಮ್ಮ ಮನೆಯಲ್ಲಿ ಕಳ್ಳತನವಾಗಿರುವ ಕುರಿತು ನೀಡಿದ ದೂರಿನ ಆಧಾರದ ಮೇಲೆ ನವಲಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಾದ ಕೂಡಲೇ ನವಲಗುಂದ ವೃತ್ತದ ಸಿಪಿಐ ರವಿಕುಮಾರ ಕಪ್ಪತನವರ ನೇತೃತ್ವದಲ್ಲಿ ತನಿಖಾ ತಂಡ ರಚಿಸಿ ವಿವಿಧ ಆಯಾಮಗಳಲ್ಲಿ ತನಿಖೆ ಕೈಗೊಳ್ಳಲಾಯಿತು.
ಗ್ರಾಮದ ಸುತ್ತಮುತ್ತಲಿನ ನಿವಾಸಿಗಳಿಂದ ಮಾಹಿತಿ ಸಂಗ್ರಹಿಸಿ, ದೊರೆತ ಸುಳಿವಿನ ಆಧಾರದ ಮೇಲೆ ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ ಮಹಿಳೆಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕಳ್ಳತನ ಕೃತ್ಯ ಎಸಗಿರುವುದಾಗಿ ಒಪ್ಪಿಕೊಂಡಿದ್ದಾಳೆ. ಬಳಿಕ ಆರೋಪಿತೆಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಆರೋಪಿತೆಯಿಂದ 42.79 ಗ್ರಾಂ ತೂಕದ ಬಂಗಾರದ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಅವುಗಳ ಅಂದಾಜು ಮೌಲ್ಯ ₹4,70,690 ಎಂದು ಪೊಲೀಸರು ತಿಳಿಸಿದ್ದಾರೆ.
ಈ ಕಾರ್ಯಾಚರಣೆ ಪೊಲೀಸ್ ಅಧೀಕ್ಷಕ ಗುಂಜನ್ ಆರ್ಯ, ಡಿಎಸ್ಪಿ ಶಿವಾನಂದ ಕಟಗಿ ಹಾಗೂ ಪೊಲೀಸ್ ಉಪಾಧೀಕ್ಷಕ ವಿನೋದ ಮುಕ್ತೇದಾರ ಅವರ ಮಾರ್ಗದರ್ಶನದಲ್ಲಿ ನಡೆದಿದ್ದು, ಸಿಪಿಐ ರವಿಕುಮಾರ ಕಪ್ಪತನವರ ನೇತೃತ್ವದ ತಂಡದಲ್ಲಿ ಪಿಎಸ್ಐ ಜನಾರ್ಧನ ಬಿ. ಹಾಗೂ ಪೊಲೀಸ್ ಸಿಬ್ಬಂದಿ ಪಾಲ್ಗೊಂಡಿದ್ದರು.
ಕೋಟ್
“ಪ್ರಕರಣ ದಾಖಲಾದ ತಕ್ಷಣವೇ ವಿಶೇಷ ತಂಡ ರಚಿಸಿ ತನಿಖೆ ಕೈಗೊಳ್ಳಲಾಯಿತು. ಸಾರ್ವಜನಿಕರ ಸಹಕಾರ ಮತ್ತು ಸಿಬ್ಬಂದಿಯ ಸಮನ್ವಯದಿಂದ ಆರೋಪಿತೆಯನ್ನು ಪತ್ತೆಹಚ್ಚಿ ಕಳುವಾದ ಚಿನ್ನಾಭರಣವನ್ನು ವಶಪಡಿಸಿಕೊಳ್ಳಲು ಸಾಧ್ಯವಾಯಿತು.”
ರವಿ. ಕಪ್ಪತನವರ್, ಸಿಪಿಐ, ನವಲಗುಂದ

