Home Blog

ಮಹಿಳೆಯರ ಶೌಚಗೃಹ ನಿರ್ಮಾಣಕ್ಕೆ ಆಗ್ರಹ

0

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಪಟ್ಟಣದ ಶಿಗ್ಲಿ ರಸ್ತೆಯಲ್ಲಿರುವ ಇಂದಿರಾ ಕ್ಯಾಂಟೀನ್ ಸಮೀಪದ ಖಾಲಿ ಜಾಗದಲ್ಲಿ ಮಹಿಳೆಯರಿಗಾಗಿ ಸುಸಜ್ಜಿತ ಸಾರ್ವಜನಿಕ ಶೌಚಗೃಹ ನಿರ್ಮಿಸಬೇಕೆಂದು ಆಗ್ರಹಿಸಿ, ಶ್ರೀ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಆಟೋ ಚಾಲಕರು ಮತ್ತು ಮಾಲೀಕರ ಸಂಘದ ಪದಾಧಿಕಾರಿಗಳು ಸೋಮವಾರ ಪುರಸಭೆ ಮುಖ್ಯಾಧಿಕಾರಿಗೆ ಮನವಿ ಸಲ್ಲಿಸಿದರು.

ಪಟ್ಟಣ ಹಾಗೂ ಸುತ್ತಮುತ್ತಲಿನ ಗ್ರಾಮಗಳಿಂದ ಪ್ರತಿದಿನ ನೂರಾರು ಮಹಿಳೆಯರು ಮತ್ತು ವಿದ್ಯಾರ್ಥಿನಿಯರು ಶಾಲೆ-ಕಾಲೇಜು, ಸರ್ಕಾರಿ ಕಚೇರಿ ಹಾಗೂ ವಿವಿಧ ವ್ಯವಹಾರಗಳ ನಿಮಿತ್ತ ಲಕ್ಷ್ಮೇಶ್ವರಕ್ಕೆ ಆಗಮಿಸುತ್ತಾರೆ. ಆದರೆ ಮಾರುಕಟ್ಟೆ ಪ್ರದೇಶದಲ್ಲಿ ಮಹಿಳೆಯರಿಗೆ ಸಾರ್ವಜನಿಕ ಶೌಚಗೃಹದ ವ್ಯವಸ್ಥೆ ಇಲ್ಲದಿರುವುದರಿಂದ ತೀವ್ರ ತೊಂದರೆ ಅನುಭವಿಸುವಂತಾಗಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಮಹಿಳೆಯರ ಸುರಕ್ಷತೆ, ಆರೋಗ್ಯ ಮತ್ತು ಗೌರವದ ದೃಷ್ಟಿಯಿಂದ ಇಂದಿರಾ ಕ್ಯಾಂಟೀನ್ ಪಕ್ಕದಲ್ಲಿರುವ ಖಾಲಿ ಜಾಗದಲ್ಲಿ ಸುಸಜ್ಜಿತ ಸಾರ್ವಜನಿಕ ಶೌಚಗೃಹ ನಿರ್ಮಿಸಿ, ಶುದ್ಧ ಕುಡಿಯುವ ನೀರು ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಬೇಕೆಂದು ಸಂಘದ ಪದಾಧಿಕಾರಿಗಳು ಆಗ್ರಹಿಸಿದರು.

ಮನವಿ ಸ್ವೀಕರಿಸಿದ ಪುರಸಭೆ ಮುಖ್ಯಾಧಿಕಾರಿ ಪರಶುರಾಮ ಗುಡದಾರಿ, ಈ ಕುರಿತು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಸೀರಾಜ್ ಢಾಲಾಯತ್, ಸೋಮು ಉಪ್ಪಾರ, ಹನಮಂತಪ್ಪ ಜಗದಮನಿ, ಮಂಜುನಾಥ ಬಸ್ಸಾಪೂರ, ಮಾಬುಸಾಬ್ ಅಂಜನವರ, ರಾಜೇಸಾಬ್ ಮುಲ್ಲಾನವರ, ಪ್ರಶಾಂತ ಹುರಕನವರ, ಬಸವರಾಜ ನಡವಳಕೇರಿ, ಚಂದ್ರಣ್ಣ ಗುಡಸಲಮನಿ, ಮಹಾಂತೇಶ ಹಾದಿಮನಿ, ಕಿರಣ ಗುಡಸಲಮನಿ, ಈರಣ್ಣ ಮೆಣಸಿನಕಾಯಿ, ಜಮಾಲ್ ನದಾಫ್, ನಿಸಾರ್ ಜಂಗಾಪೂರಿ, ಮಲ್ಲೇಶ ಅಂಕಲಿ, ನಿಸಾರ್ ಚನ್ನಪಟ್ಟಣ, ಮೃತ್ಯುಂಜಯ ಧಾರವಾಡ, ದಾವಲ್ ಹತ್ತಿಮತ್ತೂರ, ಜಿಲಾನಿ ತಲಿನ್, ಇಬ್ರಾಹಿಂ ಪಟೇಗಾರ, ಶಾಹಿದ್ ಊಳಟ್ಟಿ, ನಿಂಗಪ್ಪ ಮುಳಗುಂದ, ದಾದಾಪೀರ ಸೂರಣಗಿ, ಸುಲೇಮಾನ್ ಆಡೂರ, ಮೊಹಮ್ಮದ್ ಬಿಜಾಪುರ ಸೇರಿದಂತೆ ಸಂಘದ ಅನೇಕ ಸದಸ್ಯರು ಉಪಸ್ಥಿತರಿದ್ದರು.

ಸಾಧಕರನ್ನು ಗೌರವಿಸಿದ ಅಮ್ಮ ಫೌಂಡೇಶನ್

0

ವಿಜಯಸಾಕ್ಷಿ ಸುದ್ದಿ, ಗದಗ: ಅಮ್ಮ ಫೌಂಡೇಶನ್ (ರಿ.), ಬೆಂಗಳೂರು ವತಿಯಿಂದ ಗದಗ ಜಿಲ್ಲಾ ನೌಕರರ ಭವನದಲ್ಲಿ ತಾಲೂಕು ಮಟ್ಟದ ಸಾಧಕರಿಗೆ ಪ್ರಶಸ್ತಿ ಪ್ರದಾನ ಹಾಗೂ ಸನ್ಮಾನ ಸಮಾರಂಭ ನಡೆಯಿತು.

ಜಿಲ್ಲೆಯ ಪ್ರತಿಯೊಂದು ತಾಲೂಕಿನ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಐವರು ಸಾಧಕರನ್ನು ಗುರುತಿಸಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಜೊತೆಗೆ ಸುಮಾರು 300ಕ್ಕೂ ಹೆಚ್ಚು ಸಾಧಕರು ಹಾಗೂ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಕೃಷಿ ಕ್ಷೇತ್ರದ ಸಾಧಕರಿಗೆ ‘ಬಸವ ಕೃಷಿ ರತ್ನ’, ಮಾಜಿ ಸೈನಿಕರಿಗೆ ‘ಬಸವನಾಡ ರಕ್ಷಕ ಪ್ರಶಸ್ತಿ’, ಶಿಕ್ಷಕರಿಗೆ ‘ಬಸವ ಬೆಳಕು ಪ್ರಶಸ್ತಿ’, ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮಹಿಳೆಯರಿಗೆ ‘ಬಸವ ಭಾರತಿ ಪ್ರಶಸ್ತಿ’ ಹಾಗೂ ಕಲಾವಿದರಿಗೆ ‘ಬಸವ ಕಲಾಶಿಖರ ಪ್ರಶಸ್ತಿ’ ಪ್ರದಾನ ಮಾಡಲಾಯಿತು.

ಲಕ್ಷ್ಮೇಶ್ವರ ತಾಲೂಕಿನ ಸಂಕದಾಳ ಗ್ರಾಮದ ಪ್ರಗತಿಪರ ರೈತ ಹಾಗೂ ಮಾಜಿ ಗ್ರಾಮ ಪಂಚಾಯಿತಿ ಸದಸ್ಯ ದುರಗಪ್ಪ ಬಸಪ್ಪ ಹರಿಜನ ಅವರ ಕೃಷಿ ಕ್ಷೇತ್ರದ ಸಾಧನೆಯನ್ನು ಪರಿಗಣಿಸಿ ‘ಬಸವ ಕೃಷಿ ರತ್ನ’ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಅದೇ ಗ್ರಾಮದ ನೀಲನಗೌಡ ರಾಮನಗೌಡ ಪಾಟೀಲ, ಹಾಲಶಂಕ್ರಪ್ಪ ಮಲ್ಲಪ್ಪ ಸೂರಣಗಿ, ಪಕ್ಕೀರಯ್ಯ ಹಿರೇಮಠ ಹಾಗೂ ಹಾಲನಗೌಡ ಬಸನಗೌಡ ಪಾಟೀಲ ಅವರ ಕೃಷಿ ಸಾಧನೆಯನ್ನು ಗುರುತಿಸಿ ಅವರಿಗೂ ‘ಬಸವ ಕೃಷಿ ರತ್ನ’ ಪ್ರಶಸ್ತಿ ಪ್ರದಾನ ಮಾಡಿ ಸನ್ಮಾನಿಸಲಾಯಿತು.

ಸನ್ಮಾನಿತರಿಗೆ ಅಮ್ಮ ಫೌಂಡೇಶನ್‌ನ ಮಾರ್ಗದರ್ಶಕ ಬಸವರಾಜ ಬಳ್ಳಾರಿ, ಅಧ್ಯಕ್ಷ ಮೈಲಾರಪ್ಪ ಡಿ.ಎಚ್. ವಕೀಲ, ಖಜಾಂಚಿ ಮಾರುತಿ ಜಿ.ಎಚ್., ಕಾರ್ಯದರ್ಶಿ ವಿಶ್ವನಾಥ ದಲಾಲಿ ಹಾಗೂ ಸಂಸ್ಥೆಯ ಪದಾಧಿಕಾರಿಗಳು ಶುಭ ಹಾರೈಸಿದರು

ಮಕ್ಕಳ ಆರೋಗ್ಯವೇ ರಾಷ್ಟ್ರದ ಸಂಪತ್ತು: ಡಾ. ಪಾಂಡುರಂಗಸಾ ಹ. ಕಬಾಡಿ

0

ವಿಜಯಸಾಕ್ಷಿ ಸುದ್ದಿ, ಗದಗ: ಮಕ್ಕಳಿಗೆ ಉತ್ತಮ ಆರೋಗ್ಯ, ಗುಣಮಟ್ಟದ ಶಿಕ್ಷಣ ಹಾಗೂ ಸಂಸ್ಕಾರಯುತ ಬದುಕು ಕಲ್ಪಿಸುವುದೇ ಸಮಾಜದ ಉಜ್ವಲ ಭವಿಷ್ಯಕ್ಕೆ ಅಡಿಪಾಯವಾಗಿದೆ ಎಂದು ಡಾ. ಕಬಾಡಿ’ಸ್ ಶ್ರೀ ಸಾಯಿ ಹನುಮಾನ್ ಫೌಂಡೇಶನ್ ಮತ್ತು ಚಾರಿಟೇಬಲ್ ಟ್ರಸ್ಟ್ (ರಿ.) ಅಧ್ಯಕ್ಷ ಡಾ. ಪಾಂಡುರಂಗಸಾ ಹ. ಕಬಾಡಿ ಹೇಳಿದರು.

ನಗರದ ಕಳಸಾಪುರ ರಸ್ತೆಯ ಶ್ರೀ ಸಾಯಿ ಬಾಪೂಜಿ ನಗರದಲ್ಲಿರುವ ಶ್ರೀ ಸಾಯಿ ಹನುಮಾನ್ ಆರೋಗ್ಯ ದಾಸೋಹ ಕೇಂದ್ರದಲ್ಲಿ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ಉಚಿತ ಮಕ್ಕಳ ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.

ಅನ್ನದಿಂದ ಆರೋಗ್ಯ, ಆರೋಗ್ಯದಿಂದ ಶಿಕ್ಷಣ, ಶಿಕ್ಷಣದಿಂದ ಜ್ಞಾನ ಹಾಗೂ ಆ ಜ್ಞಾನದ ಮೂಲಕ ದೇಶಸೇವೆ ಎಂಬ ಪಂಚದಾಸೋಹದ ಆಶಯವನ್ನು ಟ್ರಸ್ಟ್ ಹೊಂದಿದ್ದು, ಅದನ್ನು ಸಾಕಾರಗೊಳಿಸಲು ಸಮಾಜದ ಸಹಕಾರ ಅಗತ್ಯವಾಗಿದೆ ಎಂದು ತಿಳಿಸಿದರು.

ಶಿಬಿರದಲ್ಲಿ ಸುಮಾರು 75 ಮಕ್ಕಳ ಆರೋಗ್ಯ ತಪಾಸಣೆ ನಡೆಸಿ, ಅಗತ್ಯವಿರುವವರಿಗೆ ಉಚಿತ ಔಷಧಿಗಳನ್ನು ವಿತರಿಸಲಾಯಿತು. ಅಲ್ಲದೆ 51 ಅಪೌಷ್ಟಿಕ ಮಕ್ಕಳಿಗೆ ಪೂರಕ ಪೌಷ್ಟಿಕ ಆಹಾರ ನೀಡಲಾಯಿತು.

ಮಕ್ಕಳ ತಜ್ಞ ಡಾ. ಈರಣ್ಣ ಹಳೆಮನಿ ಮಾತನಾಡಿ, ಮಕ್ಕಳ ಆರೋಗ್ಯದಲ್ಲಿನ ನ್ಯೂನತೆಗಳನ್ನು ಆರಂಭದಲ್ಲಿಯೇ ಪತ್ತೆಹಚ್ಚಿದರೆ ಪರಿಣಾಮಕಾರಿ ಚಿಕಿತ್ಸೆ ನೀಡಲು ಸಾಧ್ಯವಾಗುತ್ತದೆ. ಪೌಷ್ಟಿಕ ಆಹಾರದ ಕೊರತೆಯೇ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗುವುದರಿಂದ ಪೋಷಕರು ಈ ಬಗ್ಗೆ ಹೆಚ್ಚಿನ ಗಮನ ಹರಿಸಬೇಕು ಎಂದರು. ಇಂತಹ ಜನೋಪಯೋಗಿ ಕಾರ್ಯಕ್ರಮಗಳನ್ನು ಆಯೋಜಿಸುತ್ತಿರುವ ಟ್ರಸ್ಟ್‌ನ ಕಾರ್ಯವನ್ನು ಅವರು ಶ್ಲಾಘಿಸಿದರು.

ಅತಿಥಿಯಾಗಿ ಭಾಗವಹಿಸಿದ್ದ ಕಲಾವತಿ ಆನಂದ ಅಲ್ಬೂರ್, ಮಕ್ಕಳಿಗೆ ಮನೆಯಲ್ಲೇ ತಯಾರಿಸಿದ ಪೌಷ್ಟಿಕ ಆಹಾರವನ್ನೇ ನೀಡಬೇಕು. ಹೊರಗಿನ ಜಂಕ್ ಫುಡ್ ಹಾಗೂ ಪ್ಯಾಕೆಟ್ ಆಹಾರಗಳಿಂದ ಸಾಧ್ಯವಾದಷ್ಟು ದೂರವಿಡಬೇಕು ಎಂದು ಪೋಷಕರಿಗೆ ಸಲಹೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಎಸ್‌ಎಸ್‌ಕೆ ಪಂಚ್ ಟ್ರಸ್ಟ್ ಕಮಿಟಿ ಅಧ್ಯಕ್ಷ ಫಕ್ಕೀರಸಾ ಬಾಬಾಸಾ ಭಾಂಡಗೆ ಮಾತನಾಡಿ, ಮಕ್ಕಳನ್ನು ಮೊಬೈಲ್ ವ್ಯಸನದಿಂದ ದೂರವಿಟ್ಟು ಉತ್ತಮ ಸಂಸ್ಕಾರ ಹಾಗೂ ಆರೋಗ್ಯಕರ ಜೀವನಶೈಲಿಯನ್ನು ಬೆಳೆಸುವುದು ಪೋಷಕರ ಹೊಣೆಗಾರಿಕೆಯಾಗಿದೆ ಎಂದರು.

ವೇದಿಕೆಯಲ್ಲಿ ರತ್ನಾ ಬಸಪ್ಪ ಯಳಮಲಿ ಹಾಗೂ ದುರ್ಗೇಶ್ ವಿಭೂತಿ ಉಪಸ್ಥಿತರಿದ್ದರು.

ಫಾರ್ಮಸಿಸ್ಟ್ ದೀಪಕ್ ಖಟವಟೆ ವೈದ್ಯರು ಸೂಚಿಸಿದ ಔಷಧಿಗಳನ್ನು ಮಕ್ಕಳಿಗೆ ವಿತರಿಸಿದರು. ಡಾ. ದಯಾನಂದ ಕಬಾಡಿ, ಡಾ. ಸೂರಜ್ ಕಾಟಿಗೇರ ಹಾಗೂ ಲ್ಯಾಬ್ ಟೆಕ್ನಿಷಿಯನ್ ಪ್ರಕಾಶ್ ಬಿದರಿ ಶಿಬಿರದಲ್ಲಿ ಸೇವೆ ಸಲ್ಲಿಸಿದರು. ಅನ್ನಪೂರ್ಣಾ ಹಬೀಬ್, ಅಂಗನವಾಡಿ ಕಾರ್ಯಕರ್ತೆಯರಾದ ರಮೀಜಾ ಸೋಲಾಪುರ, ದೀಪಾ ವಿಭೂತಿ, ವೀಣಾ ಗಣಚಾರ ಹಾಗೂ ಆಶಾ ಕಾರ್ಯಕರ್ತೆ ಭಾರತಿ ಬಾರಕೇರ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

ಟ್ರಸ್ಟ್‌ನ ಟ್ರಸ್ಟಿ ಸ್ನೇಹಲತಾ ಕಬಾಡಿ ಮನೆಯಲ್ಲಿಯೇ ಪೌಷ್ಟಿಕ ಆಹಾರ ತಯಾರಿಸುವ ಕುರಿತು ಮಾಹಿತಿ ನೀಡಿ, ಕಾರ್ಯಕ್ರಮಕ್ಕೆ ಸಹಕರಿಸಿದ ವೈದ್ಯರು, ಅತಿಥಿಗಳು, ಸಿಬ್ಬಂದಿ, ತಾಯಂದಿರು ಹಾಗೂ ಮಕ್ಕಳಿಗೆ ಕೃತಜ್ಞತೆ ಸಲ್ಲಿಸಿದರು.

“ಅನ್ನದಿಂದ ಆರೋಗ್ಯ, ಆರೋಗ್ಯದಿಂದ ಶಿಕ್ಷಣ, ಶಿಕ್ಷಣದಿಂದ ಜ್ಞಾನ ಮತ್ತು ಜ್ಞಾನದಿಂದ ದೇಶಸೇವೆ ಎಂಬುದು ನಮ್ಮ ಪಂಚದಾಸೋಹದ ಪರಿಕಲ್ಪನೆ.”

– ಡಾ. ಪಾಂಡುರಂಗಸಾ ಹ. ಕಬಾಡಿ

ಅಂಗವಿಕಲರಿಗೆ ಮಾಸಾಶನ, ಉಚಿತ ಪ್ರಯಾಣಕ್ಕೆ ಒತ್ತಾಯ

0

ವಿಜಯಸಾಕ್ಷಿ ಸುದ್ದಿ, ಗದಗ: ಅಂಗವಿಕಲರು ಹಾಗೂ ಹಿರಿಯ ನಾಗರಿಕರಿಗೆ ಪ್ರತಿ ತಿಂಗಳ 5ನೇ ತಾರೀಕಿನೊಳಗೆ ಮಾಸಾಶನ ವಿತರಿಸಬೇಕು ಹಾಗೂ ಅದಕ್ಕೆ ಆದಾಯ ಮಿತಿಯನ್ನು ವಿಧಿಸಬಾರದು ಎಂದು ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ವಿಕಲಚೇತನರ ಘಟಕದ ಅಧ್ಯಕ್ಷ ರಾಘವೇಂದ್ರ ಮಿಶೆನ್ನವರ ಆಗ್ರಹಿಸಿದರು.

ಸೋಮವಾರ ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂಗವಿಕಲರಿಗೆ ರಾಜ್ಯಾದ್ಯಂತ ಉಚಿತ ಬಸ್ ಪ್ರಯಾಣದ ಸೌಲಭ್ಯ ಕಲ್ಪಿಸಬೇಕು. ಬಸ್‌ಗಳಲ್ಲಿ ಮೀಸಲು ಆಸನ ವ್ಯವಸ್ಥೆ ಮಾಡಬೇಕು. ಎಲ್ಲ ಸರ್ಕಾರಿ ಇಲಾಖೆಗಳ ಹೊರಗುತ್ತಿಗೆ ನೇಮಕಾತಿಯಲ್ಲಿ ಅಂಗವಿಕಲರಿಗೆ ಆದ್ಯತೆ ನೀಡಬೇಕು ಹಾಗೂ ಅವರಿಗಾಗಿ ಮೀಸಲಿರುವ ಶೇ.5ರಷ್ಟು ಅನುದಾನವನ್ನು ಸಮರ್ಪಕವಾಗಿ ಬಳಸಬೇಕು ಎಂದು ಒತ್ತಾಯಿಸಿದರು.

ಸರ್ಕಾರಿ ವಾಣಿಜ್ಯ ಮಳಿಗೆಗಳಲ್ಲಿ ಅಂಗವಿಕಲರಿಗೆ ಆದ್ಯತೆ ನೀಡಬೇಕು. ವಸತಿ ಸೌಲಭ್ಯ ಕಲ್ಪಿಸಬೇಕು. ಶೇ.40ಕ್ಕಿಂತ ಹೆಚ್ಚು ಅಂಗವೈಕಲ್ಯ ಹೊಂದಿರುವವರಿಗೆ ಯಂತ್ರಚಾಲಿತ ವಾಹನ ವಿತರಿಸಬೇಕು. ಸರ್ಕಾರಿ ಕಚೇರಿಗಳಲ್ಲಿ ಲಿಫ್ಟ್ ಆಪರೇಟರ್ ಹುದ್ದೆಗಳಿಗೆ ಅಂಗವಿಕಲರನ್ನೇ ನೇಮಕ ಮಾಡಬೇಕು ಎಂದು ಆಗ್ರಹಿಸಿದರು.

ಅಂಗವಿಕಲರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಶೀಘ್ರದಲ್ಲೇ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಘಟಕದ ಅಧ್ಯಕ್ಷ ಪರಶುರಾಮ ಆರ್. ಬೆಟಗೇರಿ, ಕೊಟ್ರೇಶ್ ಹೊನಗುಡಿ, ಪಾಂಡುರಂಗ ಹೆಬ್ವಾರ, ಮಂಜುನಾಥ ಜಾಲಗಾರ, ದುರ್ಗಪ್ಪ ಸಂಕನಕಲ್, ವೆಂಕಪ್ಪ, ಖಾಜಾ ಹುಸೇನ್ ಕಾತರಕಿ ಹಾಗೂ ಕೃಷ್ಣ ಜಾದವ್ ಉಪಸ್ಥಿತರಿದ್ದರು.

ಸಿಎಂ ವಿಜಯ್ ಸರ್ಕಾರದ ನಿರ್ಧಾರಕ್ಕೆ ಹಿನ್ನಡೆ: ಕರೂರು ಕಾಲ್ತುಳಿತ ಸಂತ್ರಸ್ತರ ಉದ್ಯೋಗ ಆದೇಶ ರದ್ದು!

0

ಚೆನ್ನೈ: ಕರೂರು ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡುವ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರ ಆದೇಶವನ್ನು ಮದ್ರಾಸ್ ಹೈಕೋರ್ಟ್ ರದ್ದುಗೊಳಿಸಿದೆ.

ಸಂತ್ರಸ್ತ ಕುಟುಂಬಗಳಿಗೆ ಕರುಣಾಳು ಆಧಾರದ ಮೇಲೆ ಸರ್ಕಾರಿ ಉದ್ಯೋಗ ನೀಡುವ ನಿರ್ಧಾರವು ಇತರರು ಕೂಡ ಇದೇ ರೀತಿಯ ಬೇಡಿಕೆ ಮುಂದಿಡಲು ಅವಕಾಶ ಕಲ್ಪಿಸಿದಂತಾಗುತ್ತದೆ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

ಸರ್ಕಾರದ ಈ ನಿರ್ಧಾರವು ಸಂವಿಧಾನದ ಆರ್ಟಿಕಲ್ 14 (ಸಮಾನತೆಯ ಹಕ್ಕು) ಹಾಗೂ ಆರ್ಟಿಕಲ್ 16 (ಸರ್ಕಾರಿ ಉದ್ಯೋಗದಲ್ಲಿ ಸಮಾನ ಅವಕಾಶ) ನಿಯಮಗಳಿಗೆ ವಿರುದ್ಧವಾಗಿದೆ ಎಂದು ನ್ಯಾಯಪೀಠ ತಿಳಿಸಿದೆ.

ಕರೂರು ಕಾಲ್ತುಳಿತ ಸಂತ್ರಸ್ತರ ಕುಟುಂಬಗಳಿಗೆ ಉದ್ಯೋಗ ನೀಡುವ ಸಂಬಂಧ ಮುಖ್ಯಮಂತ್ರಿ ವಿಜಯ್ ಅವರು ಇತ್ತೀಚೆಗೆ ಕರೂರಿಗೆ ಭೇಟಿ ನೀಡಿದ್ದರು. ಈ ವೇಳೆ ಕಾಲ್ತುಳಿತದಲ್ಲಿ ಮೃತಪಟ್ಟ 41 ಕುಟುಂಬಗಳ ಪೈಕಿ 32 ಕುಟುಂಬಗಳಿಗೆ ಕರುಣಾಳು ಆಧಾರದ ಸರ್ಕಾರಿ ಉದ್ಯೋಗದ ನೇಮಕಾತಿ ಆದೇಶ ಪತ್ರಗಳನ್ನು ವಿತರಿಸಿದ್ದರು.

ಆದರೆ ಈ ಕ್ರಮಕ್ಕೆ ವಿರೋಧ ವ್ಯಕ್ತಪಡಿಸಿದ್ದ ಹಿರಿಯ ಎಐಎಡಿಎಂಕೆ ನಾಯಕ ಆರ್.ಬಿ. ಉದಯಕುಮಾರ್, ತಮಿಳುನಾಡಿನಲ್ಲಿ ಸರ್ಕಾರಿ ನೇಮಕಾತಿಗಳು ತಮಿಳುನಾಡು ಸಾರ್ವಜನಿಕ ಸೇವಾ ಆಯೋಗ (ಟಿಎನ್‌ಪಿಎಸ್‌ಸಿ) ಮೂಲಕ ನಿಯಮಾನುಸಾರ ನಡೆಯಬೇಕು ಎಂದು ಹೇಳಿದ್ದರು.

ರಾಜಕೀಯ ಕಾರಣಗಳಿಗಾಗಿ ನಿಯಮಗಳನ್ನು ಬದಿಗೊತ್ತಿ ಸರ್ಕಾರಿ ಉದ್ಯೋಗವನ್ನು ಪರಿಹಾರವಾಗಿ ನೀಡುವುದು ಸರಿಯಲ್ಲ. ಇದರಿಂದ ಸರ್ಕಾರಿ ಉದ್ಯೋಗಕ್ಕಾಗಿ ಕಾಯುತ್ತಿರುವ ಯುವಕರ ಮೇಲೆ ಪರಿಣಾಮ ಬೀರುತ್ತದೆ ಎಂದು ಅವರು ಅಭಿಪ್ರಾಯಪಟ್ಟಿದ್ದರು.

ಕರೂರು ಕಾಲ್ತುಳಿತ ಪ್ರಕರಣ:

2025ರ ಸೆಪ್ಟೆಂಬರ್‌ನಲ್ಲಿ ಡಿಎಂಕೆ ಆಡಳಿತದಲ್ಲಿದ್ದ ವೇಳೆ ನಟ ಹಾಗೂ ಟಿವಿಕೆ ಪಕ್ಷದ ನಾಯಕ ವಿಜಯ್ ಭಾಗವಹಿಸಿದ್ದ ರ‍್ಯಾಲಿಯಲ್ಲಿ ಕಾಲ್ತುಳಿತ ಸಂಭವಿಸಿತ್ತು. ಈ ದುರಂತದಲ್ಲಿ ಮಕ್ಕಳು ಸೇರಿದಂತೆ 41 ಮಂದಿ ಮೃತಪಟ್ಟಿದ್ದರು.

ವಿಜಯ್ ಕಾರ್ಯಕ್ರಮಕ್ಕೆ ತಡವಾಗಿ ಆಗಮಿಸಿದ್ದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರಿದ್ದರು ಎಂದು ಪೊಲೀಸರು ಆರೋಪಿಸಿದ್ದರು. ಅಲ್ಲದೇ ರ‍್ಯಾಲಿ ಸ್ಥಳದಲ್ಲಿ ಕುಡಿಯುವ ನೀರು, ಆಹಾರ ಹಾಗೂ ಶೌಚಾಲಯದಂತಹ ಮೂಲ ಸೌಲಭ್ಯಗಳ ಕೊರತೆಯೂ ಇತ್ತು ಎಂದು ತನಿಖೆಯಲ್ಲಿ ಉಲ್ಲೇಖಿಸಲಾಗಿತ್ತು.

ಈ ಆರೋಪಗಳನ್ನು ಟಿವಿಕೆ ಪಕ್ಷ ತಳ್ಳಿಹಾಕಿದ್ದು, ಪೊಲೀಸರ ವೈಫಲ್ಯ ಹಾಗೂ ಮಾಜಿ ಡಿಎಂಕೆ ಸಚಿವ ಸೆಂಥಿಲ್ ಬಾಲಾಜಿ ಅವರ ಪಿತೂರಿಯಿಂದ ಘಟನೆ ನಡೆದಿದೆ ಎಂದು ಆರೋಪಿಸಿತ್ತು.

ನಂತರ ಸುಪ್ರೀಂ ಕೋರ್ಟ್ ಪ್ರಕರಣದ ತನಿಖೆಯನ್ನು ರಾಜ್ಯ ಮಟ್ಟದ ವಿಶೇಷ ತನಿಖಾ ತಂಡದಿಂದ (ಎಸ್‌ಐಟಿ) ಕೇಂದ್ರ ತನಿಖಾ ದಳಕ್ಕೆ (ಸಿಬಿಐ) ವರ್ಗಾಯಿಸಿತ್ತು. ಪ್ರಕರಣದ ತನಿಖೆಯನ್ನು ಸದ್ಯ ಸಿಬಿಐ ಮುಂದುವರಿಸುತ್ತಿದೆ.

ಬೆಂಗಳೂರು ಮೆಟ್ರೋ ಹಳಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ: ಯೆಲ್ಲೋ ಲೈನ್ ಸೇವೆ ಸ್ಥಗಿತ

ಬೆಂಗಳೂರು: ಬೆಂಗಳೂರಿನ ಯೆಲ್ಲೋ ಲೈನ್ ಮೆಟ್ರೋ ಹಳಿಗೆ ಬಿದ್ದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಸ್ಕೂರ್ ರೋಡ್ ಮೆಟ್ರೋ ನಿಲ್ದಾಣದ ಬಳಿ ನಡೆದಿದೆ.

ಸಂಜೆ ಸುಮಾರು 5.50ರ ವೇಳೆಗೆ 35 ವರ್ಷದ ವ್ಯಕ್ತಿಯೊಬ್ಬರು ರೈಲು ಬರುತ್ತಿರುವುದನ್ನು ಗಮನಿಸಿ ಏಕಾಏಕಿ ಮೆಟ್ರೋ ಹಳಿಗೆ ಹಾರಿದ್ದಾರೆ. ಘಟನೆ ಗಮನಿಸಿದ ಸ್ಟೇಷನ್ ಕಂಟ್ರೋಲರ್ ತಕ್ಷಣ ವಿದ್ಯುತ್ ಸಂಪರ್ಕ ಕಡಿತಗೊಳಿಸಿ ರೈಲು ಸಂಚಾರವನ್ನು ಸ್ಥಗಿತಗೊಳಿಸಿದ್ದಾರೆ.

ಘಟನೆಯಿಂದ ಯೆಲ್ಲೋ ಲೈನ್ ಮೆಟ್ರೋ ಸೇವೆಯಲ್ಲಿ ವ್ಯತ್ಯಯ ಉಂಟಾಗಿದ್ದು, ಸದ್ಯ ಆರ್.ವಿ. ರಸ್ತೆ ಮತ್ತು ಎಲೆಕ್ಟ್ರಾನಿಕ್ ಸಿಟಿ ಮೆಟ್ರೋ ನಿಲ್ದಾಣಗಳ ನಡುವೆ ಮಾತ್ರ ರೈಲು ಸಂಚಾರ ನಡೆಯುತ್ತಿದೆ.

ಮೆಟ್ರೋ ಸಿಬ್ಬಂದಿ ಹಾಗೂ ಪೊಲೀಸರು ಹಳಿಯಿಂದ ಮೃತದೇಹವನ್ನು ತೆರವುಗೊಳಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಸ್ಥಳಕ್ಕೆ ಹೆಬ್ಬುಗೋಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

 

ಕರ್ನಾಟಕದಲ್ಲಿ ಮಳೆ ಅಬ್ಬರ: ಈ ನಾಲ್ಕು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ!

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಜುಲೈ ಅಂತ್ಯದವರೆಗೆ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಮುನ್ಸೂಚನೆ ನೀಡಿವೆ.

ಕರಾವಳಿ ಕರ್ನಾಟಕದಲ್ಲಿ ಜುಲೈ 30ರವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಜುಲೈ 28ರಂದು ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಭಾರಿ ಮಳೆಯ ಎಚ್ಚರಿಕೆ ನೀಡಲಾಗಿದೆ. ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲೂ ಇನ್ನೂ ಕೆಲವು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.

ಜುಲೈ 28ರಂದು ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಬಿರುಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆ ಇದೆ.

ಬೆಳಗಾವಿ, ಧಾರವಾಡ ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲಿ ಗಂಟೆಗೆ 40ರಿಂದ 50 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದ್ದು, ಅದರೊಂದಿಗೆ ಮಳೆಯಾಗಲಿದೆ. ಬೀದರ್, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳಲ್ಲೂ ಮಳೆಯ ಮುನ್ಸೂಚನೆ ನೀಡಲಾಗಿದೆ.

ಕಳೆದ 24 ಗಂಟೆಗಳಲ್ಲಿ ಬೆಂಗಳೂರು ದಕ್ಷಿಣದ ಚುಂಚನಕುಪ್ಪೆಯಲ್ಲಿ 78 ಮಿ.ಮೀ., ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿ 66.5 ಮಿ.ಮೀ., ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಆಗುಂಬೆಯಲ್ಲಿ 66.4 ಮಿ.ಮೀ., ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ನೆರಿಯದಲ್ಲಿ 65 ಮಿ.ಮೀ. ಮಳೆಯಾಗಿದೆ. ವಿಜಯನಗರ ಜಿಲ್ಲೆಯ ಹರಪ್ಪನಹಳ್ಳಿಯ ಪುಣಭಘಟ್ಟದಲ್ಲಿ 58 ಮಿ.ಮೀ., ಕೊಡಗು ಜಿಲ್ಲೆಯ ವಿರಾಜಪೇಟೆಯ ಬಿರುನಾನಿಯಲ್ಲಿ 48 ಮಿ.ಮೀ. ಹಾಗೂ ಶೃಂಗೇರಿಯ ಬೇಗಾರಿನಲ್ಲಿ 47 ಮಿ.ಮೀ. ಮಳೆ ದಾಖಲಾಗಿದೆ.

ಮೇಕೆದಾಟು ಯೋಜನೆಗೆ ತಮಿಳುನಾಡಿನ ಒಪ್ಪಿಗೆ ಅಗತ್ಯವಿಲ್ಲ: ಕೇಂದ್ರ ಸರ್ಕಾರ ಸ್ಪಷ್ಟನೆ!

0

ನವದೆಹಲಿ: ಮೇಕೆದಾಟು ಯೋಜನೆ ಜಾರಿಗೊಳಿಸಲು ಕರ್ನಾಟಕವು ತಮಿಳುನಾಡು, ಕೇರಳ ಹಾಗೂ ಪುದುಚೇರಿ ರಾಜ್ಯಗಳ ಪ್ರತ್ಯೇಕ ಒಪ್ಪಿಗೆ ಪಡೆಯುವ ಅಗತ್ಯವಿಲ್ಲ ಎಂದು ಕೇಂದ್ರ ಜಲಶಕ್ತಿ ಸಚಿವಾಲಯ ಸ್ಪಷ್ಟಪಡಿಸಿದೆ.

ರಾಜ್ಯಸಭೆಯ ಪ್ರಶ್ನೋತ್ತರ ಅವಧಿಯಲ್ಲಿ ತಮಿಳುನಾಡಿನ ಸಂಸದ ಡಾ. ಅನ್ಬುಮಣಿ ರಾಮದಾಸ್ ಕೇಳಿದ ಪ್ರಶ್ನೆಗೆ ಕೇಂದ್ರ ಜಲಶಕ್ತಿ ಖಾತೆ ರಾಜ್ಯ ಸಚಿವ ರಾಜ್ ಭೂಷಣ್ ಚೌಧರಿ ಲಿಖಿತ ಉತ್ತರ ನೀಡಿದರು.

2018ರಲ್ಲಿ ಕಾವೇರಿ ನೀರು ಹಂಚಿಕೆ ಕುರಿತು ಸುಪ್ರೀಂ ಕೋರ್ಟ್ ನೀಡಿದ ತೀರ್ಪಿನಲ್ಲಿ, ಕಾವೇರಿ ನದಿಗೆ ಅಡ್ಡಲಾಗಿ ಯಾವುದೇ ಯೋಜನೆ ಕೈಗೊಳ್ಳಲು ಕರ್ನಾಟಕವು ತಮಿಳುನಾಡು, ಕೇರಳ ಅಥವಾ ಪುದುಚೇರಿಯ ಒಪ್ಪಿಗೆ ಪಡೆಯಬೇಕು ಎಂದು ಎಲ್ಲಿಯೂ ಉಲ್ಲೇಖಿಸಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು.

ಕಾವೇರಿ ನೀರು ವಿವಾದ ನ್ಯಾಯಾಧಿಕರಣದ 2007ರ ತೀರ್ಪಿನ 18ನೇ ವಿಧಿಯನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದ್ದು, ಅದರ ಪ್ರಕಾರ ನ್ಯಾಯಾಧಿಕರಣದ ಆದೇಶಕ್ಕೆ ಧಕ್ಕೆಯಾಗದಂತೆ ತಮ್ಮ ಗಡಿಭಾಗದ ವ್ಯಾಪ್ತಿಯಲ್ಲಿ ನೀರಿನ ಬಳಕೆ ಹಾಗೂ ಸೌಲಭ್ಯಗಳನ್ನು ನಿಯಂತ್ರಿಸುವ ಅಧಿಕಾರ ಆಯಾ ರಾಜ್ಯಗಳಿಗೆ ಇದೆ ಎಂದು ತಿಳಿಸಿದ್ದಾರೆ.

ಇದೇ ವೇಳೆ, ಕರ್ನಾಟಕ ಸರ್ಕಾರವು 2019ರಲ್ಲಿ ಸಲ್ಲಿಸಿದ್ದ ಮೇಕೆದಾಟು ಜಲಾಶಯ ಮತ್ತು ಕುಡಿಯುವ ನೀರಿನ ಯೋಜನೆಯ ಸಮಗ್ರ ಯೋಜನಾ ವರದಿಯನ್ನು ಕೇಂದ್ರ ಸರ್ಕಾರ ಹಿಂದಿರುಗಿಸಿದ್ದು, ಕಾವೇರಿ ನ್ಯಾಯಾಧಿಕರಣದ ಆದೇಶ ಹಾಗೂ ಕೇಂದ್ರ ಜಲ ಆಯೋಗದ ಮಾರ್ಗಸೂಚಿಗಳಿಗೆ ಅನುಗುಣವಾಗಿ ಪರಿಷ್ಕೃತ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ ಎಂದು ಸಚಿವಾಲಯ ತಿಳಿಸಿದೆ.

 

ದುಬೈಗೆ ತೆರಳುತ್ತಿದ್ದ ಇಂಡಿಗೋ ವಿಮಾನದಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ!

0

ಮುಂಬೈ: ಮುಂಬೈನಿಂದ ದುಬೈಗೆ ತೆರಳುತ್ತಿದ್ದ ಇಂಡಿಗೋ ವಿಮಾನದ ಸರಕು ಸಂಗ್ರಹ ವಿಭಾಗದಲ್ಲಿ ಹೊಗೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಗುಜರಾತ್‌ನ ರಾಜ್‌ಕೋಟ್ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಲಾಗಿದೆ.

ಇಂಡಿಗೋ 6E 1452 ವಿಮಾನದಲ್ಲಿ ಒಟ್ಟು 194 ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಸರಕು ಸಂಗ್ರಹ ವಿಭಾಗದಲ್ಲಿ ಹೊಗೆ ಕಾಣಿಸಿಕೊಂಡಿರುವುದನ್ನು ಗಮನಿಸಿದ ಪೈಲಟ್‌ಗಳು ಕೂಡಲೇ ರಾಜ್‌ಕೋಟ್ ವಿಮಾನ ಸಂಚಾರ ನಿಯಂತ್ರಣ ಕೇಂದ್ರವನ್ನು ಸಂಪರ್ಕಿಸಿ ತುರ್ತು ಭೂಸ್ಪರ್ಶಕ್ಕೆ ಅನುಮತಿ ಕೋರಿದರು.

ಈ ಮಾಹಿತಿ ದೊರೆಯುತ್ತಿದ್ದಂತೆಯೇ ರಾಜ್‌ಕೋಟ್ ವಿಮಾನ ನಿಲ್ದಾಣದಲ್ಲಿ ತುರ್ತು ಪರಿಸ್ಥಿತಿಯನ್ನು ಘೋಷಿಸಲಾಯಿತು. ಬಳಿಕ ವಿಮಾನವನ್ನು ಸುರಕ್ಷಿತವಾಗಿ ಭೂಸ್ಪರ್ಶ ಮಾಡಿಸಲಾಯಿತು.

ವಿಮಾನದಲ್ಲಿದ್ದ ಎಲ್ಲಾ ಪ್ರಯಾಣಿಕರು ಹಾಗೂ ಸಿಬ್ಬಂದಿಯನ್ನು ಸುರಕ್ಷಿತವಾಗಿ ಹೊರಗೆ ಕರೆತರಲಾಗಿದ್ದು, ಯಾರಿಗೂ ಯಾವುದೇ ಗಾಯಗಳಾಗಿಲ್ಲ ಅಥವಾ ಪ್ರಾಣಾಪಾಯ ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆಯ ಬಳಿಕ ಸುರಕ್ಷತಾ ಸಿಬ್ಬಂದಿ ಹಾಗೂ ತಾಂತ್ರಿಕ ತಜ್ಞರು ವಿಮಾನವನ್ನು ಪರಿಶೀಲನೆಗೆ ಒಳಪಡಿಸಿದ್ದಾರೆ. ಸರಕು ಸಂಗ್ರಹ ವಿಭಾಗದಲ್ಲಿ ಹೊಗೆ ಕಾಣಿಸಿಕೊಳ್ಳಲು ನಿಖರ ಕಾರಣವೇನು ಎಂಬುದರ ಕುರಿತು ತಾಂತ್ರಿಕ ತನಿಖೆ ನಡೆಯುತ್ತಿದೆ.

ದುಬೈಗೆ ತೆರಳಬೇಕಿದ್ದ ಪ್ರಯಾಣಿಕರಿಗೆ ಪರ್ಯಾಯ ವಿಮಾನದ ವ್ಯವಸ್ಥೆ ಮಾಡಲಾಗಿದೆ ಎಂದು ಇಂಡಿಗೋ ಸಂಸ್ಥೆ ತಿಳಿಸಿದೆ.

ಸಿನಿಮಾದಿಂದ ಜನಸೇವೆಯತ್ತ ಧನುಷ್ ಹೆಜ್ಜೆ? ಅಭಿಮಾನಿಗಳಿಗೆ ಕೊಟ್ಟ ಸಂದೇಶವೇ ರಾಜಕೀಯ ಪ್ರವೇಶದ ಸುಳಿವಾ?

ಚೆನ್ನೈ: ತಮಿಳುನಾಡಿನ ರಾಜಕೀಯದಲ್ಲಿ ಮತ್ತೊಬ್ಬ ಸಿನಿಮಾ ತಾರೆ ಎಂಟ್ರಿ ಕೊಡಲಿದ್ದಾರಾ ಎಂಬ ಪ್ರಶ್ನೆ ಇದೀಗ ಮುನ್ನೆಲೆಗೆ ಬಂದಿದೆ. ನಟ ಧನುಷ್ ಅವರು ಅಭಿಮಾನಿಗಳನ್ನು ಉದ್ದೇಶಿಸಿ ನೀಡಿದ ಸಮಾಜ ಸೇವೆಯ ಸಂದೇಶ ಹಾಗೂ ತಮ್ಮ ಅಭಿಮಾನಿ ಸಂಘದ ಹೊಸ ಧ್ವಜ ಅನಾವರಣ ರಾಜಕೀಯ ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ದಳಪತಿ ವಿಜಯ್ ಬಳಿಕ ಧನುಷ್ ಕೂಡ ರಾಜಕೀಯ ಅಖಾಡಕ್ಕೆ ಇಳಿಯುವ ಸಿದ್ಧತೆ ನಡೆಸುತ್ತಿದ್ದಾರಾ ಎಂಬ ಕುತೂಹಲ ಹೆಚ್ಚಾಗಿದೆ.

ಚೆನ್ನೈನಲ್ಲಿ ನಡೆದ ರಕ್ತದಾನ ಶಿಬಿರದಲ್ಲಿ ಭಾಗವಹಿಸಿದ್ದ ಧನುಷ್, ತಮ್ಮ ಅಭಿಮಾನಿಗಳ ಒಗ್ಗಟ್ಟನ್ನು ಪ್ರಶಂಸಿಸಿದರು. ಇಷ್ಟು ದೊಡ್ಡ ಸಂಖ್ಯೆಯಲ್ಲಿ ಜನರು ಒಂದೇ ಉದ್ದೇಶಕ್ಕಾಗಿ ಸೇರುವುದು ದೊಡ್ಡ ಶಕ್ತಿ. ಈ ಶಕ್ತಿಯನ್ನು ಕೇವಲ ಸಿನಿಮಾಗಳಿಗೆ ಮಾತ್ರ ಬಳಸದೆ ಸಮಾಜದ ಒಳಿತಿಗಾಗಿ ಬಳಸಬೇಕು ಎಂದು ಧನುಷ್ ಹೇಳಿದ್ದಾರೆ.

ಜನರ ಸಮಸ್ಯೆಗಳಿಗೆ ಸ್ಪಂದಿಸಿ, ಸ್ಥಳೀಯ ಮಟ್ಟದಲ್ಲಿ ಅಗತ್ಯವಿರುವವರಿಗೆ ಸಹಾಯ ಮಾಡುವಂತೆ ಅವರು ಅಭಿಮಾನಿಗಳಿಗೆ ಸೂಚಿಸಿದ್ದಾರೆ.

ಧನುಷ್ ಅವರ ಈ ಮಾತುಗಳು ಕೇವಲ ಅಭಿಮಾನಿಗಳಿಗೆ ನೀಡಿದ ಸಲಹೆಯೇ ಅಥವಾ ರಾಜಕೀಯ ಪ್ರವೇಶದ ಮೊದಲ ಹೆಜ್ಜೆಯೇ ಎಂಬ ಚರ್ಚೆ ಈಗ ತಮಿಳುನಾಡಿನಲ್ಲಿ ಜೋರಾಗಿದೆ. ರಕ್ತದಾನ ಶಿಬಿರದ ವೇದಿಕೆಯಲ್ಲಿ ಧನುಷ್ ತಮ್ಮ ಅಭಿಮಾನಿ ಸಂಘದ ಹೊಸ ಧ್ವಜವನ್ನು ಅನಾವರಣ ಮಾಡಿರುವುದು ವಿಶೇಷ ಗಮನ ಸೆಳೆದಿದೆ.

ಸಾಮಾನ್ಯವಾಗಿ ತಮಿಳುನಾಡಿನಲ್ಲಿ ಸಿನಿಮಾ ಅಭಿಮಾನಿ ಸಂಘಗಳು ರಾಜಕೀಯ ಚಟುವಟಿಕೆಗಳ ಮೊದಲ ಹಂತವಾಗಿರುವ ಹಿನ್ನೆಲೆಯಲ್ಲಿ, ಧನುಷ್ ಅವರ ಈ ಬೆಳವಣಿಗೆಯನ್ನು ರಾಜಕೀಯ ವಿಶ್ಲೇಷಕರು ಗಮನಿಸುತ್ತಿದ್ದಾರೆ.

ನಟ ವಿಜಯ್ ಕೂಡ ರಾಜಕೀಯ ಪ್ರವೇಶಕ್ಕೂ ಮೊದಲು ಅಭಿಮಾನಿ ಸಂಘಗಳ ಮೂಲಕ ಜನಸೇವಾ ಕಾರ್ಯಕ್ರಮಗಳನ್ನು ನಡೆಸಿದ್ದರು. ಬಳಿಕ ಪಕ್ಷ ಸ್ಥಾಪಿಸಿ ಚುನಾವಣಾ ರಾಜಕೀಯಕ್ಕೆ ಕಾಲಿಟ್ಟಿದ್ದರು. ಇದೀಗ ಧನುಷ್ ಅವರ ಹೆಜ್ಜೆಗಳು ಕೂಡ ಅದೇ ಮಾದರಿಯಲ್ಲಿವೆ ಎಂಬ ಅಭಿಪ್ರಾಯ ಸಾಮಾಜಿಕ ಜಾಲತಾಣಗಳಲ್ಲಿ ವ್ಯಕ್ತವಾಗುತ್ತಿದೆ.

ಧನುಷ್ ಅವರು 2031ರ ವಿಧಾನಸಭಾ ಚುನಾವಣೆಯಲ್ಲಿ ಕಣಕ್ಕಿಳಿಯಬಹುದು ಎಂಬ ಚರ್ಚೆಗಳೂ ನಡೆಯುತ್ತಿವೆ.

ಧನುಷ್ ಅವರ ಸಿನಿಮಾ ಪಯಣದಲ್ಲೂ ಜನಪರ ವಿಚಾರಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ‘ಅಸುರನ್’ನಲ್ಲಿ ಶೋಷಿತರ ಪರ ಧ್ವನಿಯಾಗಿದ್ದ ಅವರು, ‘ಕರ್ಣನ್’ನಲ್ಲಿ ಸಾಮಾಜಿಕ ಅನ್ಯಾಯದ ವಿರುದ್ಧ ಹೋರಾಡುವ ಪಾತ್ರ ನಿರ್ವಹಿಸಿದ್ದರು.

‘ಕ್ಯಾಪ್ಟನ್ ಮಿಲ್ಲರ್’ ಚಿತ್ರದಲ್ಲಿ ದಬ್ಬಾಳಿಕೆ ವಿರುದ್ಧ ಹೋರಾಡುವ ಕ್ರಾಂತಿಕಾರಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಸಾಮಾಜಿಕ ಸಂದೇಶ ಹೊಂದಿರುವ ಸಿನಿಮಾಗಳು, ಅಭಿಮಾನಿ ಸಂಘದ ಚಟುವಟಿಕೆಗಳು ಹಾಗೂ ಜನರೊಂದಿಗೆ ಸಂಪರ್ಕ ಬೆಳೆಸುವ ಪ್ರಯತ್ನ — ಧನುಷ್ ಅವರ ಮುಂದಿನ ರಾಜಕೀಯ ಹೆಜ್ಜೆಗಳ ಬಗ್ಗೆ ಕುತೂಹಲ ಹೆಚ್ಚಿಸಿದೆ.