Home Blog

ನರೇಗಲ್ಲದಲ್ಲಿ ಬೆಳೆ ಹಾನಿ ಪರಿಶೀಲಿಸಿದ ಜಿಲ್ಲಾಧಿಕಾರಿ

0

ವಿಜಯಸಾಕ್ಷಿ ಸುದ್ದಿ, ನರೇಗಲ್ಲ: ಮುಂಗಾರು ಮಳೆಯ ಕೊರತೆಯಿಂದ ನರೇಗಲ್ಲ ಹೋಬಳಿಯಲ್ಲಿ ಉಂಟಾಗಿರುವ ಬೆಳೆ ಹಾನಿಯನ್ನು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಅವರು ಗುರುವಾರ ಕೃಷಿ ಇಲಾಖೆ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಗದಗ ರಸ್ತೆಯಲ್ಲಿರುವ ವಿವಿಧ ರೈತರ ಜಮೀನುಗಳಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳಿಗೆ ರೈತ ಮುಖಂಡರು ಬೆಳೆ ಹಾನಿಯ ವಾಸ್ತವ ಸ್ಥಿತಿಯನ್ನು ತೋರಿಸಿದರು. ಮಳೆ ಕೊರತೆಯಿಂದ ಹೆಸರು, ಉದ್ದು, ಮೆಕ್ಕೆಜೋಳ, ತೊಗರಿ, ಉಳ್ಳಾಗಡ್ಡಿ, ಶೇಂಗಾ ಹಾಗೂ ಮೆಣಸಿನಕಾಯಿ ಸೇರಿದಂತೆ ವಿವಿಧ ಬೆಳೆಗಳ ಬೆಳವಣಿಗೆ ಕುಂಠಿತಗೊಂಡಿದ್ದು, ಕೆಲವೆಡೆ ಗೋವಿನಜೋಳದ ಬೆಳೆ ಸಂಪೂರ್ಣ ಒಣಗುತ್ತಿರುವ ದೃಶ್ಯವನ್ನು ಅಧಿಕಾರಿಗಳ ತಂಡ ಕಣ್ಣಾರೆ ವೀಕ್ಷಿಸಿತು.

ರೈತರೊಂದಿಗೆ ಮಾತುಕತೆ ನಡೆಸಿದ ಜಿಲ್ಲಾಧಿಕಾರಿಗಳು ಮಳೆಯ ಅಭಾವದಿಂದ ಎದುರಾಗಿರುವ ಸಂಕಷ್ಟಗಳ ಕುರಿತು ಮಾಹಿತಿ ಪಡೆದು, ಇಲ್ಲಿನ ಬೆಳೆ ಹಾನಿಯ ವಾಸ್ತವ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ಭರವಸೆ ನೀಡಿದರು.

ಬೆಳೆ ವಿಮೆ ಕುರಿತು ಮಾತನಾಡಿದ ಅವರು, ಬ್ಯಾಂಕ್‌ಗಳಲ್ಲಿ ಬೆಳೆ ಸಾಲ ಪಡೆದಿರುವ ರೈತರಿಗೆ ಹೆಸರು ಮತ್ತು ಉದ್ದು ಬೆಳೆಗಳಿಗೆ ಮಾತ್ರ ಜುಲೈ 22ರವರೆಗೆ ಬೆಳೆ ವಿಮೆ ನೋಂದಣಿಗೆ ಅವಕಾಶ ವಿಸ್ತರಿಸಲಾಗಿದೆ ಎಂದು ತಿಳಿಸಿದರು. ಸಾಲ ನವೀಕರಣ ಸೇರಿದಂತೆ ತಾಂತ್ರಿಕ ಕಾರಣಗಳಿಂದ ವಿಮೆ ನೋಂದಣಿ ಮಾಡಿಸದ ರೈತರು ಈ ಅವಕಾಶವನ್ನು ಬಳಸಿಕೊಳ್ಳುವಂತೆ ಸಲಹೆ ನೀಡಿದರು.

ಈ ವೇಳೆ ರೈತರು ಬ್ಯಾಂಕ್‌ಗಳಲ್ಲಿ ಸಾಲ ನವೀಕರಣ ವಿಳಂಬವಾಗುತ್ತಿರುವುದು ಹಾಗೂ 2025ರ ಮುಂಗಾರು ಹಂಗಾಮಿನ ಗೋವಿನಜೋಳ ಬೆಳೆ ವಿಮೆ ಪರಿಹಾರ ಇನ್ನೂ ಬಿಡುಗಡೆಯಾಗಿಲ್ಲ ಎಂದು ಗಮನ ಸೆಳೆದರು. ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿಗಳು, ಬ್ಯಾಂಕ್ ಅಧಿಕಾರಿಗಳೊಂದಿಗೆ ಚರ್ಚಿಸಿ ಸಮಸ್ಯೆ ಬಗೆಹರಿಸುವುದಾಗಿ ಹಾಗೂ ಬಾಕಿ ಇರುವ ವಿಮೆ ಪರಿಹಾರವನ್ನು ಶೀಘ್ರ ಬಿಡುಗಡೆಗೊಳಿಸಲು ಕ್ರಮ ಕೈಗೊಳ್ಳುವುದಾಗಿ ಹೇಳಿದರು.

ಮಳೆ ಅಭಾವದಿಂದ ರೈತರು ತೀವ್ರ ಸಂಕಷ್ಟ ಎದುರಿಸುತ್ತಿದ್ದು, ಸರ್ಕಾರ ತುರ್ತು ಪರಿಹಾರ ಕ್ರಮಗಳನ್ನು ಕೈಗೊಂಡು ಬೆಳೆ ವಿಮೆ ಪರಿಹಾರವನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ರೈತರು ಆಗ್ರಹಿಸಿದರು. ರೈತರ ಅಹವಾಲುಗಳನ್ನು ಆಲಿಸಿದ ಜಿಲ್ಲಾಧಿಕಾರಿಗಳು ಸೂಕ್ತ ಕ್ರಮದ ಭರವಸೆ ನೀಡಿದರು.

ಕುತೂಹಲಕಾರಿ ಸಂಗತಿಯೆಂದರೆ, ಅಧಿಕಾರಿಗಳ ತಂಡ ಬೆಳೆ ಹಾನಿ ಪರಿಶೀಲನೆ ನಡೆಸುತ್ತಿದ್ದ ವೇಳೆಯೇ ಮಳೆ ಸುರಿಯತೊಡಗಿದ್ದು, ಪರಿಶೀಲನಾ ಕಾರ್ಯ ಕೆಲಕಾಲ ಸ್ಥಗಿತಗೊಳ್ಳುವಂತಾಯಿತು.

ಪರಿಶೀಲನೆ ವೇಳೆ ಉಪ ವಿಭಾಗಾಧಿಕಾರಿಗಳು, ಕೃಷಿ ಇಲಾಖೆಯ ಜಂಟಿ ನಿರ್ದೇಶಕರು, ರೋಣ ಉಪ ಕೃಷಿ ನಿರ್ದೇಶಕರು, ರೋಣ ಸಹಾಯಕ ಕೃಷಿ ನಿರ್ದೇಶಕರು, ನರೇಗಲ್ಲ ಕೃಷಿ ಅಧಿಕಾರಿಗಳು, ಕಂದಾಯ ಹಾಗೂ ತೋಟಗಾರಿಕೆ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ರೈತ ಮುಖಂಡರಾದ ಅಶೋಕ ಬೇವಿನಕಟ್ಟಿ, ಚಂದ್ರು ಹೊನವಾಡ, ಶರಣಪ್ಪ ಧರ್ಮಾಯತ್, ಯಲ್ಲಪ್ಪ ಮಣ್ಣವಡ್ಡರ, ಬಸನಗೌಡ ಪಾಟೀಲ, ಮಲ್ಲನಗೌಡ ಪಾಟೀಲ, ಶರಣಪ್ಪ ಶೀಕಣಿ, ಆನಂದ ಕೊಟಗಿ, ಸಂಗಯ್ಯ ಶಾಂತಯ್ಯನಮಠ, ಶಶಿಧರ ಸಂಕನಗೌಡರ, ನಿಂಗನಗೌಡ ಲಕ್ಕನಗೌಡ್ರ, ಮಹೇಶ ಶಿವಶಿಂಪ್ರ, ನಿಂಗಪ್ಪ ಕಣವಿ ಹಾಗೂ ಬಸನಗೌಡ ಪೊಲೀಸ್ ಪಾಟೀಲ ಸೇರಿದಂತೆ ಅನೇಕ ರೈತರು ಉಪಸ್ಥಿತರಿದ್ದರು.

ಬರ ನಿರ್ವಹಣೆಯಲ್ಲಿ ಸರ್ಕಾರ ಸಂಪೂರ್ಣ ವಿಫಲ: ಸಂಸದ ಬಸವರಾಜ ಬೊಮ್ಮಾಯಿ

0

ವಿಜಯಸಾಕ್ಷಿ ಸುದ್ದಿ, ಗದಗ: ರಾಜ್ಯದಲ್ಲಿ ಮುಂಗಾರು ಮಳೆ ಸಂಪೂರ್ಣ ಕೈಕೊಟ್ಟ ಪರಿಣಾಮ ತೀವ್ರ ಬರ ಪರಿಸ್ಥಿತಿ ನಿರ್ಮಾಣವಾಗಿದ್ದರೂ, ಸರ್ಕಾರ ಬರ ನಿರ್ವಹಣೆಯಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ನಗರದ ಹಿರೇಹಂದಿಗೋಳ ರಸ್ತೆಯ ಗಂಗಿಮಡಿ ಪ್ರದೇಶದಲ್ಲಿ ರೈತರ ಹೊಲಗಳಿಗೆ ಭೇಟಿ ನೀಡಿ ಬರ ಪರಿಸ್ಥಿತಿ ಪರಿಶೀಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರಂಭದಲ್ಲಿ ಉತ್ತಮ ಮಳೆಯಾಗಿದ್ದರಿಂದ ರೈತರು ನಿರೀಕ್ಷೆಯಿಂದ ಬಿತ್ತನೆ ಮಾಡಿದ್ದರು. ಆದರೆ ಜುಲೈ ತಿಂಗಳಲ್ಲಿ ಮಳೆ ಸಂಪೂರ್ಣವಾಗಿ ಕೈಕೊಟ್ಟ ಪರಿಣಾಮ ಬೆಳೆಗಳು ಒಣಗುತ್ತಿದ್ದು, ಹಲವೆಡೆ ಬಿತ್ತನೆಯೇ ಆಗಿಲ್ಲ. ಬಿತ್ತನೆ ಮಾಡಿದ ಬೆಳೆಗಳೂ ಹಾನಿಗೊಳಗಾಗಿದ್ದು, ವಿಶೇಷವಾಗಿ ಹೆಸರು ಬೆಳೆ ಸಂಪೂರ್ಣ ನಷ್ಟವಾಗಿದೆ ಎಂದು ಕಳವಳ ವ್ಯಕ್ತಪಡಿಸಿದರು.

ರಾಜ್ಯದ ವಿವಿಧ ಭಾಗಗಳಲ್ಲಿ ಬರದ ತೀವ್ರತೆ ಬೇರೆಬೇರೆಯಾಗಿದ್ದರೂ ಸರ್ಕಾರ ಇದುವರೆಗೆ ವೈಜ್ಞಾನಿಕ ಬೆಳೆ ಸಮೀಕ್ಷೆ ನಡೆಸಿಲ್ಲ. ಕಂದಾಯ, ಕೃಷಿ, ತೋಟಗಾರಿಕೆ ಹಾಗೂ ಸಾಂಖ್ಯಿಕ ಇಲಾಖೆ ಅಧಿಕಾರಿಗಳು ಜಂಟಿಯಾಗಿ ಸಮೀಕ್ಷೆ ನಡೆಸಿ ವರದಿ ಸಲ್ಲಿಸಿದಾಗ ಮಾತ್ರ ಅದು ಅಧಿಕೃತವಾಗುತ್ತದೆ. ಎನ್‌ಡಿಆರ್‌ಎಫ್ ನಿಯಮಾವಳಿಗಳ ಪ್ರಕಾರ ಅಗತ್ಯ ಎಸ್‌ಒಪಿ ಸಿದ್ಧಪಡಿಸದೆ ಸರ್ಕಾರ ನಿರ್ಲಕ್ಷ್ಯ ವಹಿಸಿದೆ ಎಂದು ಆರೋಪಿಸಿದರು.

ಬರ ನಿರ್ವಹಣೆಗೆ ಯಾವುದೇ ತುರ್ತು ಯೋಜನೆ ರೂಪಿಸಿಲ್ಲ. ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಪರ್ಯಾಯ ವ್ಯವಸ್ಥೆಯೂ ಇಲ್ಲ. ಪಶ್ಚಿಮ ಘಟ್ಟದಲ್ಲಿ ಮಳೆಯಾಗಿ ನದಿಗಳಲ್ಲಿ ನೀರು ಹರಿಯುತ್ತಿದ್ದರೂ, ಅದನ್ನು ರೈತರಿಗೆ ತಲುಪಿಸುವ ವ್ಯವಸ್ಥೆ ಮಾಡಿಲ್ಲ. ರಾಜ್ಯದ ಸುಮಾರು 145 ಏತ ನೀರಾವರಿ ಯೋಜನೆಗಳು ದುರಸ್ತಿ ಹಾಗೂ ವಿದ್ಯುತ್ ಬಿಲ್ ಪಾವತಿಸದ ಕಾರಣ ಸ್ಥಗಿತಗೊಂಡಿವೆ ಎಂದು ದೂರಿದರು.

ಪ್ರತಿ ಜಿಲ್ಲೆಯ ಜಿಲ್ಲಾಧಿಕಾರಿಗಳ ಪಿಡಿ ಖಾತೆಯಲ್ಲಿ ₹15 ರಿಂದ ₹20 ಕೋಟಿ ಹಣ ಲಭ್ಯವಿದ್ದು, ಅದನ್ನು ಬರ ಪರಿಹಾರ ಹಾಗೂ ಕುಡಿಯುವ ನೀರಿನ ಯೋಜನೆಗಳಿಗೆ ಬಳಸಬೇಕು. ಹಣದ ಕೊರತೆಯ ನೆಪ ಹೇಳುವುದನ್ನು ಸರ್ಕಾರ ಬಿಡಬೇಕು ಎಂದ ಅವರು, ಕೇಂದ್ರ ಸರ್ಕಾರದ ರೈತರ ಮೊಬೈಲ್ ಆ್ಯಪ್ ಕುರಿತು ಜಾಗೃತಿ ಮೂಡಿಸಿ, ಬೆಳೆ ಮಾಹಿತಿ ಸಂಗ್ರಹಿಸುವ ಕೆಲಸವನ್ನೂ ತ್ವರಿತಗೊಳಿಸಬೇಕು ಎಂದು ಒತ್ತಾಯಿಸಿದರು.

ಬಿಜೆಪಿ ಸರ್ಕಾರದ ಅವಧಿಯಲ್ಲಿ ಎನ್‌ಡಿಆರ್‌ಎಫ್ ಮಾನದಂಡಕ್ಕಿಂತ ಎರಡು ಪಟ್ಟು ಹೆಚ್ಚಿನ ಪರಿಹಾರ ನೀಡಲಾಗಿತ್ತು. ಒಣ ಬೇಸಾಯಕ್ಕೆ ₹13,600, ನೀರಾವರಿ ಬೆಳೆಗೆ ₹25,000 ಹಾಗೂ ತೋಟಗಾರಿಕೆ ಬೆಳೆಗಳಿಗೆ ₹28,000ವರೆಗೆ ಪರಿಹಾರ ನೀಡಿದ್ದೇವೆ. ಆದರೆ ಈಗಿನ ಸರ್ಕಾರ ರೈತರ ಸಂಕಷ್ಟ ಮರೆತು ರಾಜಕೀಯದಲ್ಲೇ ನಿರತವಾಗಿದೆ ಎಂದು ಟೀಕಿಸಿದರು.

ಇನ್ನೊಂದು ವಾರದಲ್ಲಿ ಬಿಜೆಪಿ ರೈತ ಮೋರ್ಚಾ ವತಿಯಿಂದ ಗದಗ ಜಿಲ್ಲೆಯಾದ್ಯಂತ ಸ್ವತಂತ್ರವಾಗಿ ಬೆಳೆ ಸಮೀಕ್ಷೆ ನಡೆಸಿ ವರದಿ ಸಿದ್ಧಪಡಿಸಿ ರಾಜ್ಯ ಹಾಗೂ ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗುವುದು. ಸರ್ಕಾರ ತಕ್ಷಣ ಕ್ರಮ ಕೈಗೊಳ್ಳದಿದ್ದರೆ ರೈತರ ಪರವಾಗಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ, ಬಿಜೆಪಿ ಜಿಲ್ಲಾಧ್ಯಕ್ಷ ರಾಜು ಕುರಡಗಿ, ಕೃಷಿ ಇಲಾಖೆ ಅಧಿಕಾರಿಗಳು ಹಾಗೂ ಪಕ್ಷದ ಮುಖಂಡರು ಉಪಸ್ಥಿತರಿದ್ದರು.

“ಬರ ನಿರ್ವಹಣೆಯಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ರೈತರ ಸಮಸ್ಯೆಗೆ ಸರ್ಕಾರ ತಕ್ಷಣ ಸ್ಪಂದಿಸದಿದ್ದರೆ ಬಿಜೆಪಿ ರೈತ ಮೋರ್ಚಾ ಉಗ್ರ ಹೋರಾಟ ನಡೆಸಲಿದೆ.”

– ಬಸವರಾಜ ಬೊಮ್ಮಾಯಿ

ಅನರ್ಹರಿಗೆ ಗ್ಯಾರಂಟಿ ಸೌಲಭ್ಯ ಬೇಡ: ಎಚ್.ಎಂ. ರೇವಣ್ಣ

0

ವಿಜಯಸಾಕ್ಷಿ ಸುದ್ದಿ, ಗದಗ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಯೋಜನೆಗಳ ಸೌಲಭ್ಯಗಳು ಯಾವುದೇ ಲೋಪದೋಷಗಳಿಲ್ಲದೆ ಅರ್ಹ ಫಲಾನುಭವಿಗಳಿಗೆ ತಲುಪುವಂತೆ ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್.ಎಂ. ರೇವಣ್ಣ ಸೂಚಿಸಿದರು.

ನಗರದ ಜಿಲ್ಲಾಡಳಿತ ಭವನದ ಕೇಸ್ವಾನ್ ಕಾನ್ಫರೆನ್ಸ್ ಸಭಾಂಗಣದಲ್ಲಿ ಶುಕ್ರವಾರ ನಡೆದ ವಿಡಿಯೊ ಸಂವಾದದ ಮೂಲಕ ಗೃಹಲಕ್ಷ್ಮಿ ಹಾಗೂ ಗೃಹಜ್ಯೋತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಗೃಹಲಕ್ಷ್ಮಿ ಯೋಜನೆಯಡಿ ಮೃತಪಟ್ಟ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ಹಣ ಜಮೆಯಾಗುವುದನ್ನು ತಡೆಯಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ತಪ್ಪು ಮಾಹಿತಿ ನೀಡಿ ಯೋಜನೆಗಳ ಲಾಭ ಪಡೆದವರಿಂದ ನಿಯಮಾನುಸಾರ ಹಣವನ್ನು ವಸೂಲಿ ಮಾಡಿ, ಈ ಪ್ರಕ್ರಿಯೆಯನ್ನು ಎರಡು ವಾರಗಳಲ್ಲಿ ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಗೃಹಜ್ಯೋತಿ ಯೋಜನೆಯಡಿ ಇನ್ನೂ ನೋಂದಣಿ ಮಾಡಿಸಿಕೊಳ್ಳದ ಅರ್ಹ ಗ್ರಾಹಕರ ನೋಂದಣಿ ಪ್ರಕ್ರಿಯೆಯನ್ನು ತ್ವರಿತಗೊಳಿಸುವಂತೆ ಹೆಸ್ಕಾಂ ಸೇರಿದಂತೆ ವಿದ್ಯುತ್ ಸರಬರಾಜು ಕಂಪನಿಗಳ ಅಧಿಕಾರಿಗಳಿಗೆ ಸೂಚಿಸಿದ ಅವರು, ಗ್ರಾಮೀಣ ಪ್ರದೇಶಗಳಲ್ಲಿ ವ್ಯಾಪಕ ಜಾಗೃತಿ ಮೂಡಿಸುವಂತೆ ತಿಳಿಸಿದರು.

ಗ್ಯಾರಂಟಿ ಯೋಜನೆಗಳ ಯಶಸ್ಸಿನ ಸಂಕೇತವಾಗಿ ಹಾಗೂ ಪರಿಸರ ಸಂರಕ್ಷಣೆಗಾಗಿ ಪ್ರತಿಯೊಂದು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಫಲಾನುಭವಿಗಳ ಮೂಲಕ ಕನಿಷ್ಠ ಒಂದು ಬೇವಿನ ಅಥವಾ ಆಲದ ಮರ ನೆಡುವ ವಿಶೇಷ ಅಭಿಯಾನ ಹಮ್ಮಿಕೊಳ್ಳುವಂತೆ ಸಲಹೆ ನೀಡಿದರು.

ಸಭೆಯಲ್ಲಿ ಮಾತನಾಡಿದ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಎಸ್.ಆರ್. ಪಾಟೀಲ (ಬ್ಯಾಡಗಿ), ಜುಲೈ 19ಕ್ಕೆ ಗೃಹಲಕ್ಷ್ಮಿ ಯೋಜನೆಗೆ ಮೂರು ವರ್ಷ ಪೂರ್ಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಪಂಚಾಯಿತಿ ಮಟ್ಟದಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಕುರಿತು ಚರ್ಚಿಸಲಾಯಿತು ಎಂದು ತಿಳಿಸಿದರು.

ಗದಗ ಜಿಲ್ಲೆಯ ಅಂಕಿ-ಅಂಶ

ಸಭೆಯಲ್ಲಿ ಅಧಿಕಾರಿಗಳು ನೀಡಿದ ಮಾಹಿತಿಯಂತೆ, ಮಾರ್ಚ್ 2026ರವರೆಗೆ ಗದಗ ಜಿಲ್ಲೆಯಲ್ಲಿ ಗೃಹಲಕ್ಷ್ಮಿ ಯೋಜನೆಯ 5,650 ಫಲಾನುಭವಿಗಳು ಮೃತಪಟ್ಟಿರುವುದು ದಾಖಲಾಗಿದೆ. ಇವರಲ್ಲಿ 2,207 ಮಂದಿಯ ಬ್ಯಾಂಕ್ ಖಾತೆಗಳಿಗೆ ಮರಣದ ಬಳಿಕವೂ ಒಟ್ಟು 11,978 ಕಂತುಗಳ ರೂಪದಲ್ಲಿ ₹2.39 ಕೋಟಿ (₹2,39,56,000) ಹಣ ಜಮೆಯಾಗಿರುವುದು ಪತ್ತೆಯಾಗಿದೆ.

ಸಭೆಯಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ. ಅಸೂಟಿ, ತಾಲೂಕು ಅಧ್ಯಕ್ಷರಾದ ಅಶೋಕ್ ಮಂದಾಲಿ, ಡಿ.ಡಿ. ಮೊರನಾಳ, ಸದಸ್ಯ ಕೃಷ್ಣಗೌಡ ಎಚ್. ಪಾಟೀಲ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕಿ ರಾಧಾ ಮಣ್ಣೂರ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಹುಲಿಗೆಮ್ಮ ಜೋಗೇರ, ಹೆಸ್ಕಾಂ ಅಧೀಕ್ಷಕ ಇಂಜಿನಿಯರ್ ನಜ್ಮನ್ನಿಸ್ ಕೆ. ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

“ಗ್ಯಾರಂಟಿ ಯೋಜನೆಗಳು ಬಡವರು ಮತ್ತು ಮಧ್ಯಮ ವರ್ಗದವರಿಗೆ ಆಸರೆಯಾಗಿವೆ. ಯಾವುದೇ ಕಾರಣಕ್ಕೂ ಅನರ್ಹರು ಇದರ ದುರುಪಯೋಗಪಡಿಸಿಕೊಳ್ಳಲು ಅವಕಾಶ ನೀಡಬಾರದು. ಅರ್ಹರಿಗೆ ಮಾತ್ರ ಯೋಜನೆಗಳ ಸೌಲಭ್ಯ ತಲುಪುವಂತೆ ಅಧಿಕಾರಿಗಳು ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು.”

– ಎಚ್.ಎಂ. ರೇವಣ್ಣ, ಅಧ್ಯಕ್ಷರು, ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ

ಐಐಟಿಗೆ ಆಯ್ಕೆಯಾದ ವಿದ್ಯಾರ್ಥಿನಿಗೆ ಸನ್ಮಾನ

0

ವಿಜಯಸಾಕ್ಷಿ ಸುದ್ದಿ, ಗದಗ: ನಗರದ ಬಾಲ ವಿನಾಯಕ ವಿದ್ಯಾನಿಕೇತನ (ಬಿವಿವಿ) ಶಾಲೆಯ ಹಳೆಯ ವಿದ್ಯಾರ್ಥಿನಿ ಕುಮಾರಿ ಪ್ರಿಯದರ್ಶಿನಿ ಹಿರೇಮಠ ಭಾರತೀಯ ತಂತ್ರಜ್ಞಾನ ಸಂಸ್ಥೆ (ಐಐಟಿ)ಗೆ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ಶಾಲೆಯ ವತಿಯಿಂದ ಅಭಿನಂದನಾ ಸಮಾರಂಭ ಏರ್ಪಡಿಸಿ ಸನ್ಮಾನಿಸಲಾಯಿತು.

ಶಾಲೆಯ ಆಡಳಿತ ಮಂಡಳಿ, ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ಸಮ್ಮುಖದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಿಯದರ್ಶಿನಿ ಅವರನ್ನು ಸನ್ಮಾನಿಸಿ ಶುಭ ಹಾರೈಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಪ್ರಿಯದರ್ಶಿನಿ ಹಿರೇಮಠ, ಶಾಲೆಯ ಆಡಳಿತ ಮಂಡಳಿಯ ಪ್ರೋತ್ಸಾಹ, ಶಿಕ್ಷಕರ ಮಾರ್ಗದರ್ಶನ, ಶಾಲೆಯಲ್ಲಿ ದೊರೆತ ಉತ್ತಮ ಸಂಸ್ಕಾರ ಹಾಗೂ ನಿರಂತರ ಪರಿಶ್ರಮವೇ ತಮ್ಮ ಯಶಸ್ಸಿನ ಹಿಂದಿನ ಪ್ರಮುಖ ಕಾರಣಗಳಾಗಿವೆ. ಪರೀಕ್ಷೆಯ ಸಮಯದಲ್ಲಿ ಮಾತ್ರ ಓದುವುದಕ್ಕಿಂತ ಪ್ರತಿದಿನದ ಶಿಸ್ತಿನ ಅಧ್ಯಯನವೇ ದೊಡ್ಡ ಸಾಧನೆಗೆ ದಾರಿ ಮಾಡಿಕೊಡುತ್ತದೆ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಶಾಲೆಯ ನಿರ್ದೇಶಕ ವಿನಾಯಕ ಆರ್. ಮಾತನಾಡಿ, ವಿದ್ಯಾರ್ಥಿಗಳ ಸಾಧನೆಯೇ ಶಿಕ್ಷಕರ ನಿಜವಾದ ಸಾಧನೆಯಾಗಿದೆ. ಕಲಿಕೆಯಲ್ಲಿ ನಿರಂತರತೆ, ಶ್ರದ್ಧೆ, ಪ್ರಾಮಾಣಿಕತೆ, ಶಿಸ್ತು ಹಾಗೂ ಉತ್ತಮ ಸಂಸ್ಕಾರ ಬೆಳೆಸಿಕೊಂಡರೆ ಯಶಸ್ಸು ಖಚಿತ. ಈ ಸನ್ಮಾನ ಕೇವಲ ಒಬ್ಬ ವಿದ್ಯಾರ್ಥಿನಿಯ ಸಾಧನೆಗೆ ಸೀಮಿತವಲ್ಲ, ಇತರ ವಿದ್ಯಾರ್ಥಿಗಳಿಗೂ ಪ್ರೇರಣೆಯಾಗಲಿ ಎಂದು ಆಶಿಸಿದರು.

ಕಾರ್ಯಕ್ರಮದಲ್ಲಿ ಶಾಲೆಯ ಪ್ರಾಚಾರ್ಯ ವಿ.ಎಂ. ಅಡ್ನೂರ, ಶಿಕ್ಷಕ ಹಾಗೂ ಶಿಕ್ಷಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಈ ವೇಳೆ ಸಾಧನೆಗೈದ ವಿದ್ಯಾರ್ಥಿನಿಗೆ ಸನ್ಮಾನಿಸಿ ಸ್ಮರಣಿಕೆ ಹಾಗೂ ಕಿರುಕಾಣಿಕೆ ನೀಡಿ ಗೌರವಿಸಲಾಯಿತು.

ಹಳೆಯ ವಿದ್ಯಾರ್ಥಿನಿಯ ಪರಿಚಯವನ್ನು ಗುರುಮಾತೆ ಸಿಂಧು ಸಾಮ್ರಾಣಿ ಮಾಡಿಕೊಟ್ಟರು. ರೇಣುಕಾ ಈರಗಾರ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

ಜು. 29ರಂದು ಶ್ರೀ ಹಡಪದ ಅಪ್ಪಣ್ಣನವರ ಜಯಂತಿ

0

ವಿಜಯಸಾಕ್ಷಿ ಸುದ್ದಿ, ಗದಗ: ಶ್ರೀ ಹಡಪದ ಅಪ್ಪಣ್ಣನವರ ಜಯಂತಿಯನ್ನು ಜುಲೈ 29ರಂದು ಜಿಲ್ಲಾಡಳಿತ ಭವನದ ಆಡಿಟೋರಿಯಂನಲ್ಲಿ ಅರ್ಥಪೂರ್ಣ ಹಾಗೂ ಅಚ್ಚುಕಟ್ಟಾಗಿ ಆಚರಿಸಲು ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಡಾ. ದುರ್ಗೇಶ್ ಕೆ.ಆರ್. ಅಧಿಕಾರಿಗಳಿಗೆ ಸೂಚನೆ ನೀಡಿದರು.

ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಯಂತಿಯ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲಾ ಮಟ್ಟದ ಜೊತೆಗೆ ತಾಲೂಕು ಮಟ್ಟದಲ್ಲೂ ಜಯಂತಿಯನ್ನು ಆಚರಿಸಲು ಕ್ರಮ ಕೈಗೊಳ್ಳಬೇಕು. ಶಾಲೆ, ಕಾಲೇಜು, ಗ್ರಾಮ ಪಂಚಾಯಿತಿ ಹಾಗೂ ಸರ್ಕಾರಿ ಕಚೇರಿಗಳಲ್ಲೂ ಶ್ರೀ ಹಡಪದ ಅಪ್ಪಣ್ಣನವರ ಜಯಂತಿ ಆಚರಿಸುವಂತೆ ಸಂಬಂಧಿಸಿದ ಇಲಾಖೆಗಳು ಅಗತ್ಯ ಕ್ರಮ ವಹಿಸಬೇಕು ಎಂದು ನಿರ್ದೇಶನ ನೀಡಿದರು.

ಜಯಂತಿ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಮಾಜದ ಹಿರಿಯರನ್ನು ಹಾಗೂ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ಸಮಾಜದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಗುವುದು. ಕಾರ್ಯಕ್ರಮದ ಯಶಸ್ವಿ ಆಯೋಜನೆಗಾಗಿ ಎಲ್ಲ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.

ಶಿಷ್ಟಾಚಾರದಂತೆ ಆಹ್ವಾನ ಪತ್ರಿಕೆ ಮುದ್ರಣ, ವೇದಿಕೆ ವ್ಯವಸ್ಥೆ, ಉಪನ್ಯಾಸಕರ ಆಯ್ಕೆ, ಊಟೋಪಹಾರ, ಬ್ಯಾನರ್ ಅಳವಡಿಕೆ ಸೇರಿದಂತೆ ಅಗತ್ಯ ಸಿದ್ಧತೆಗಳನ್ನು ಸಮಯಕ್ಕೆ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಭೆಯಲ್ಲಿ ಸಮಾಜದ ಮುಖಂಡರು ಹಾಗೂ ಪದಾಧಿಕಾರಿಗಳು ವಿವಿಧ ಸಲಹೆ-ಸೂಚನೆಗಳನ್ನು ನೀಡಿದರು.

ಸಭೆಯಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಸ್.ಬಿ. ಮಸನಾಯಕ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಎಂ.ಎನ್. ತುಂಬರಮಟ್ಟಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ. ಬಸವರಾಜ ವಿ. ಬಳ್ಳಾರಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಹಾಗೂ ಸಮಾಜದ ಮುಖಂಡರು ಉಪಸ್ಥಿತರಿದ್ದರು.

“ಶ್ರೀ ಹಡಪದ ಅಪ್ಪಣ್ಣನವರ ಜಯಂತಿಯನ್ನು ಜಿಲ್ಲೆ ಮತ್ತು ತಾಲೂಕು ಮಟ್ಟದಲ್ಲಿ ಅರ್ಥಪೂರ್ಣವಾಗಿ, ವ್ಯವಸ್ಥಿತವಾಗಿ ಹಾಗೂ ಜನಸ್ಪಂದನೆಯೊಂದಿಗೆ ಆಚರಿಸಬೇಕು.”

– ಡಾ. ದುರ್ಗೇಶ್ ಕೆ.ಆರ್., ಅಪರ ಜಿಲ್ಲಾಧಿಕಾರಿ

ರಾಜಧಾನಿ ಬೆಂಗಳೂರಿನ ಹಲವೆಡೆ ಭಾರೀ ಮಳೆ: ಸಂಚಾರಕ್ಕೆ ತೊಂದರೆ, ವಾಹನ ಸವಾರರ ಪರದಾಟ!

ಬೆಂಗಳೂರು: ರಾಜಧಾನಿ ಬೆಂಗಳೂರಿನ ಹಲವು ಭಾಗಗಳಲ್ಲಿ ಇಂದು ಮಳೆಯಾಗಿದೆ.

ಮೈಸೂರು ರಸ್ತೆ, ಟೌನ್ ಹಾಲ್, ಚಾಮರಾಜಪೇಟೆ, ಕಾರ್ಪೊರೇಷನ್, ಕೆಆರ್ ಸರ್ಕಲ್, ಕೆಆರ್ ಮಾರ್ಕೆಟ್, ಮಲ್ಲೇಶ್ವರಂ, ಶೇಷಾದ್ರಿಪುರಂ ಸೇರಿದಂತೆ ನಗರದ ವಿವಿಧ ಪ್ರದೇಶಗಳಲ್ಲಿ ಮಳೆಯಾಗಿದ್ದು, ವಾಹನ ಸವಾರರು ಪರದಾಡುವಂತಾಯಿತು.

ಮಳೆ ಹಿನ್ನೆಲೆಯಲ್ಲಿ ಕೆಲವೆಡೆ ಸಂಚಾರ ನಿಧಾನಗತಿಯಲ್ಲಿ ಸಾಗಿದ್ದು, ರಸ್ತೆಯಲ್ಲಿ ಸಂಚರಿಸುವವರು ತೊಂದರೆ ಅನುಭವಿಸಿದರು.

ಇನ್ನು ಮುಂದಿನ ಮೂರ್ನಾಲ್ಕು ದಿನ ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಬೆಳಗಾವಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ನಿರೀಕ್ಷೆ ಇದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಮಳೆಗಾಲದ ನಡುವೆಯೂ ಕೆಲವೆಡೆ ಬಿಸಿಲಿನ ತೀವ್ರತೆ ಹೆಚ್ಚಾಗಿ ಬೇಸಿಗೆಯ ಅನುಭವವಾಗುತ್ತಿದ್ದು, ಇದೀಗ ಮತ್ತೆ ಮಳೆ ಚುರುಕುಗೊಂಡಿದೆ. ಜುಲೈ 18 ಮತ್ತು 19ರಂದು ರಾಜ್ಯದ ಹಲವು ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.

ರೈತರ ಸಂಕಷ್ಟಕ್ಕೆ ವಿಶೇಷ ಪ್ಯಾಕೇಜ್ ಘೋಷಿಸಿ

0

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಮುಂಗಾರು ಮಳೆ ಕೈಕೊಟ್ಟ ಪರಿಣಾಮ ಶಿರಹಟ್ಟಿ ವಿಧಾನಸಭಾ ಕ್ಷೇತ್ರದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ಕ್ಷೇತ್ರವನ್ನು ತಕ್ಷಣವೇ ಬರಪೀಡಿತ ಪ್ರದೇಶವೆಂದು ಘೋಷಿಸಿ ಪ್ರತಿ ಎಕರೆಗೆ ₹50 ಸಾವಿರ ಪರಿಹಾರ ಸೇರಿದಂತೆ ವಿಶೇಷ ನೆರವು ಘೋಷಿಸಬೇಕು ಎಂದು ಶಾಸಕ ಡಾ. ಚಂದ್ರು ಲಮಾಣಿ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.

ಗುರುವಾರ ಬೆಂಗಳೂರಿನಲ್ಲಿ ಕಂದಾಯ ಇಲಾಖೆ (ವಿಪತ್ತು ನಿರ್ವಹಣೆ) ಪ್ರಧಾನ ಕಾರ್ಯದರ್ಶಿ ಮನೋಜ್ ಕುಮಾರ್ ಮೀನಾ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಅವರು, ಮಳೆಯ ಕೊರತೆಯಿಂದ ಕ್ಷೇತ್ರದಲ್ಲಿ ಸಾವಿರಾರು ಎಕರೆ ಪ್ರದೇಶದಲ್ಲಿ ಬಿತ್ತನೆ ಮಾಡಿದ ಬೆಳೆಗಳು ಒಣಗುತ್ತಿದ್ದು, ರೈತರು ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ ಎಂದು ವಿವರಿಸಿದರು.

ಮಳೆ ಇಲ್ಲದ ಕಾರಣ ಭೂಮಿಯಲ್ಲಿನ ತೇವಾಂಶ ಸಂಪೂರ್ಣವಾಗಿ ಕಳೆದು ಹೋಗಿದ್ದು, ಬೆಳೆಗಳು ನಾಶವಾಗುವ ಹಂತ ತಲುಪಿವೆ. ಬಿತ್ತನೆಗಾಗಿ ಬ್ಯಾಂಕ್‌ಗಳು ಹಾಗೂ ಖಾಸಗಿ ಮೂಲಗಳಿಂದ ಸಾಲ ಪಡೆದು ಬೀಜ, ರಸಗೊಬ್ಬರ ಮತ್ತು ಕೃಷಿ ಚಟುವಟಿಕೆಗಳಿಗೆ ಲಕ್ಷಾಂತರ ರೂಪಾಯಿ ವೆಚ್ಚ ಮಾಡಿದ ರೈತರಿಗೆ ಇದೀಗ ಸಂಕಷ್ಟ ಎದುರಾಗಿದೆ ಎಂದು ಹೇಳಿದರು.

ಕುಡಿಯುವ ನೀರಿನ ಮೂಲಗಳಾದ ಕೆರೆ, ಕೊಳವೆಬಾವಿಗಳು ಬತ್ತುತ್ತಿರುವುದರಿಂದ ಜಾನುವಾರುಗಳಿಗೆ ನೀರು ಮತ್ತು ಮೇವು ಸಿಗದ ಪರಿಸ್ಥಿತಿ ನಿರ್ಮಾಣವಾಗಿದೆ. ಪಶುಗಳನ್ನು ಸಾಕುವುದು ಕಷ್ಟವಾಗಿರುವ ಕಾರಣ ಅನೇಕ ರೈತರು ತಮ್ಮ ಜಾನುವಾರುಗಳನ್ನು ಸಂತೆಗೆ ಕೊಂಡೊಯ್ದು ಮಾರಾಟ ಮಾಡುವ ಅನಿವಾರ್ಯತೆ ಎದುರಿಸಿದ್ದಾರೆ ಎಂದು ಆತಂಕ ವ್ಯಕ್ತಪಡಿಸಿದರು.

ರೈತರ ಸಂಕಷ್ಟವನ್ನು ಮನಗಂಡು ಸರ್ಕಾರ ತಕ್ಷಣವೇ ಶಿರಹಟ್ಟಿ ಕ್ಷೇತ್ರವನ್ನು ಬರಪೀಡಿತ ಪ್ರದೇಶವೆಂದು ಘೋಷಿಸಬೇಕು. ಪ್ರತಿ ಎಕರೆಗೆ ₹50 ಸಾವಿರ ಪರಿಹಾರ ಘೋಷಿಸುವುದರ ಜೊತೆಗೆ ಬೆಳೆಹಾನಿಯ ಸಮಗ್ರ ಸಮೀಕ್ಷೆ ನಡೆಸಿ ಪರಿಹಾರ ವಿತರಣೆ, ಬೆಳೆ ಸಾಲ ಮರುಪಾವತಿಗೆ ಕಾಲಾವಕಾಶ, ಬಡ್ಡಿ ಮನ್ನಾ, ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ಮೇವು ಒದಗಿಸುವ ವಿಶೇಷ ಪ್ಯಾಕೇಜ್ ಜಾರಿಗೊಳಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಿದರು.

ರಾಜ್ಯ ವಿಪತ್ತು ಪರಿಹಾರ ನಿಧಿಯಿಂದ ವಿಶೇಷ ಅನುದಾನ ಬಿಡುಗಡೆ ಮಾಡಿ ಶಿರಹಟ್ಟಿ ಕ್ಷೇತ್ರದ ರೈತರ ಹಿತರಕ್ಷಣೆಗೆ ಸರ್ಕಾರ ತುರ್ತು ಕ್ರಮ ಕೈಗೊಳ್ಳಬೇಕು ಎಂದು ಪ್ರಧಾನ ಕಾರ್ಯದರ್ಶಿಗೆ ಶಾಸಕರು ಮನವಿ ಸಲ್ಲಿಸಿದರು.

“ಮಳೆಯ ಅಭಾವದಿಂದ ಶಿರಹಟ್ಟಿ ಕ್ಷೇತ್ರದ ರೈತರು ತೀವ್ರ ಸಂಕಷ್ಟದಲ್ಲಿದ್ದಾರೆ. ಸರ್ಕಾರ ವಿಳಂಬ ಮಾಡದೆ ಕ್ಷೇತ್ರವನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿ ಪ್ರತಿ ಎಕರೆಗೆ ₹50 ಸಾವಿರ ಪರಿಹಾರ ಸೇರಿದಂತೆ ವಿಶೇಷ ಪ್ಯಾಕೇಜ್ ಘೋಷಿಸಬೇಕು.”

– ಡಾ. ಚಂದ್ರು ಲಮಾಣಿ, ಶಾಸಕ, ಶಿರಹಟ್ಟಿ ಕ್ಷೇತ್ರ

ಗ್ರಾಮೀಣರಿಗೆ ಉಚಿತ ನೇತ್ರ ತಪಾಸಣೆ; 30 ಮಂದಿಗೆ ಕಣ್ಣಿನ ಪೊರೆ ಪತ್ತೆ

0

ವಿಜಯಸಾಕ್ಷಿ ಸುದ್ದಿ, ನರೇಗಲ್ಲ: ಕಣ್ಣಿನ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ವಹಿಸದೆ, ನಿಯಮಿತವಾಗಿ ನೇತ್ರ ತಪಾಸಣೆ ಮಾಡಿಸಿಕೊಳ್ಳುವ ಮೂಲಕ ದೃಷ್ಟಿಯನ್ನು ಕಾಪಾಡಿಕೊಳ್ಳಬೇಕು ಎಂದು ಗದಗ ಜಿಲ್ಲಾ ರೈತ ಸಂಘದ ಅಧ್ಯಕ್ಷ ಮುತ್ತಣ್ಣ ಚೌಡರೆಡ್ಡಿ ಹೇಳಿದರು.

ಸಮೀಪದ ಅಬ್ಬಿಗೇರಿಯಲ್ಲಿ ನವಜ್ಯೋತಿ ಗ್ರಾಮೀಣಾಭಿವೃದ್ಧಿ ವಿವಿಧೋದ್ದೇಶ ಹಾಗೂ ಶಿಕ್ಷಣ ಸೇವಾ ಸಂಸ್ಥೆ, ಹುಬ್ಬಳ್ಳಿಯ ಜಯಪ್ರಿಯಾ ಫೌಂಡೇಶನ್, ಕರ್ನಾಟಕ ರಾಜ್ಯ ರೈತ ಸಂಘದ ರೋಣ ತಾಲೂಕು ಹಾಗೂ ಅಬ್ಬಿಗೇರಿ ಗ್ರಾಮ ಘಟಕ ಮತ್ತು ಗದಗ ಜಿಲ್ಲಾ ಕಟ್ಟಡ ಕಾರ್ಮಿಕ ಸಂಘದ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ಉಚಿತ ನೇತ್ರ ತಪಾಸಣೆ ಹಾಗೂ ಶಸ್ತ್ರಚಿಕಿತ್ಸಾ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಗ್ರಾಮೀಣ ಭಾಗದ ಬಡ ಜನರಿಗೆ ಗುಣಮಟ್ಟದ ನೇತ್ರ ಚಿಕಿತ್ಸೆ ಸುಲಭವಾಗಿ ದೊರೆಯುವುದಿಲ್ಲ. ಇಂತಹ ಸಂದರ್ಭದಲ್ಲಿ ವಿವಿಧ ಸಂಘ-ಸಂಸ್ಥೆಗಳು ಒಗ್ಗೂಡಿ ಉಚಿತ ಆರೋಗ್ಯ ಶಿಬಿರಗಳನ್ನು ಆಯೋಜಿಸುತ್ತಿರುವುದು ಶ್ಲಾಘನೀಯ. ಬಡವರ ಕಣ್ಣಿಗೆ ಬೆಳಕು ನೀಡುವ ಇಂತಹ ಸೇವಾ ಕಾರ್ಯಗಳು ನಿರಂತರವಾಗಿ ನಡೆಯಬೇಕು ಎಂದು ಹೇಳಿದರು.

ಕರ್ನಾಟಕ ರಾಜ್ಯ ರೈತ ಸಂಘದ ರೋಣ ತಾಲೂಕು ಅಧ್ಯಕ್ಷ ಸಂಗಣ್ಣ ಪವಾಡಶೆಟ್ಟಿ ಮಾತನಾಡಿ, ರೈತರು ದಿನವಿಡೀ ಬಿಸಿಲು, ಧೂಳು ಹಾಗೂ ಪ್ರತಿಕೂಲ ಪರಿಸ್ಥಿತಿಯಲ್ಲಿ ದುಡಿಯುವುದರಿಂದ ಕಣ್ಣಿನ ಸಮಸ್ಯೆಗಳಿಗೆ ಹೆಚ್ಚು ಒಳಗಾಗುತ್ತಾರೆ. ಆರ್ಥಿಕ ಸಮಸ್ಯೆಯಿಂದ ಅನೇಕರು ಚಿಕಿತ್ಸೆ ಪಡೆಯಲು ಸಾಧ್ಯವಾಗುವುದಿಲ್ಲ. ಇಂತಹ ಉಚಿತ ಶಿಬಿರಗಳು ಗ್ರಾಮೀಣ ಜನರಿಗೆ ವರದಾನವಾಗಿವೆ ಎಂದು ಹೇಳಿದರು.

ಶಿಬಿರದಲ್ಲಿ ಹುಬ್ಬಳ್ಳಿಯ ಜಯಪ್ರಿಯಾ ಕಣ್ಣಿನ ಆಸ್ಪತ್ರೆಯ ನೇತ್ರ ತಜ್ಞ ಡಾ. ಚಂದ್ರು, ಶ್ರೀಕಾಂತ ರೋಣ ಹಾಗೂ ವೈದ್ಯಕೀಯ ತಂಡ ಸುಮಾರು 150 ಮಂದಿಯ ನೇತ್ರ ತಪಾಸಣೆ ನಡೆಸಿತು. ತಪಾಸಣೆ ವೇಳೆ 30 ಮಂದಿಯಲ್ಲಿ ಕಣ್ಣಿನ ಪೊರೆ ಪತ್ತೆಯಾಗಿದ್ದು, ಅವರಿಗೆ ಉಚಿತವಾಗಿ ಶಸ್ತ್ರಚಿಕಿತ್ಸೆ ನಡೆಸಲು ನಿರ್ಧರಿಸಲಾಯಿತು.

ಗದಗ ಜಿಲ್ಲಾ ಕಟ್ಟಡ ಕಾರ್ಮಿಕ ಸಂಘದ ಅಧ್ಯಕ್ಷ ವೀರೇಶ ಕಲಹಾಳ ಪ್ರಾಸ್ತಾವಿಕವಾಗಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಬಸವರಾಜ ಪಲ್ಲೇದ, ವಿನಾಯಕ ಜೋಶಿ, ವೀರಯ್ಯ ಅರಳಿಕಟ್ಟಿ, ಸಂಗಣ್ಣ ದಂಡಿನ, ಶಿವಲಿಂಗಪ್ಪ ತಿಪಶೆಟ್ಟಿ, ಬಸನಗೌಡ್ರ ಚನ್ನಪ್ಪಗೌಡ್ರ, ಶಂಕ್ರಪ್ಪ ಆರೇರ, ಬುದ್ದಿವಂತಪ್ಪ ಉಪಾಧ್ಯ, ಸೋಮಣ್ಣ ಕಣವಿ, ಕಳಕಪ್ಪ ನೀರಲೋಟಿ, ಮಲ್ಲಾರಪ್ಪ ಚವಡಿ, ಮಾದೇವಿ ಅಸೂಟಿ, ರಮೇಶ ಇಮ್ರಾಪುರ, ಮಲ್ಲಪ್ಪ ಎಂಡಿಗೇರಿ, ಮಲ್ಲಪ್ಪ ನೀರಲೋಟಿ, ಪ್ರಕಾಶ ಮಾರನಬಸರಿ, ಮಹೇಶ ಚವಡಿ, ಶರಣಪ್ಪ ಹಳ್ಳಿ, ಶರಣಪ್ಪ ಬಸವರಡ್ಡೇರ, ಬಸವರಾಜ ಬಸವರಡ್ಡೇರ, ಶಿವಶಿಂಪರ, ವೀರಪ್ಪ ತಳವಾರ ಸೇರಿದಂತೆ ಹಲವರು ಉಪಸ್ಥಿತರಿದ್ದರು.

“ದೃಷ್ಟಿ ಮಾನವನ ಬದುಕಿನ ಅಮೂಲ್ಯ ಸಂಪತ್ತು. ಕಣ್ಣಿನ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ವಹಿಸದೆ, ನಿಯಮಿತವಾಗಿ ನೇತ್ರ ತಪಾಸಣೆ ಮಾಡಿಸಿಕೊಳ್ಳುವುದು ಅತ್ಯಗತ್ಯ.”

– ಮುತ್ತಣ್ಣ ಚೌಡರೆಡ್ಡಿ, ಅಧ್ಯಕ್ಷರು, ಗದಗ ಜಿಲ್ಲಾ ರೈತ ಸಂಘ

ಶಿರಹಟ್ಟಿ ಕ್ಷೇತ್ರದಲ್ಲಿ ಎಸ್‌ಐಆರ್‌ಗೆ ಚುರುಕು: ಶೇ.75ಕ್ಕೂ ಅಧಿಕ ಪ್ರಗತಿ

0

ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ಶಿರಹಟ್ಟಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಶಿರಹಟ್ಟಿ, ಲಕ್ಷ್ಮೇಶ್ವರ ಹಾಗೂ ಮುಂಡರಗಿ ತಾಲೂಕುಗಳಲ್ಲಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಕಾರ್ಯ ವೇಗವಾಗಿ ಸಾಗುತ್ತಿದ್ದು, ಈಗಾಗಲೇ ಶೇ.75ಕ್ಕೂ ಅಧಿಕ ಪ್ರಗತಿ ಸಾಧಿಸಲಾಗಿದೆ ಎಂದು ಶಿರಹಟ್ಟಿ ವಿಧಾನಸಭಾ ಕ್ಷೇತ್ರದ ಮತದಾರರ ನೋಂದಣಾಧಿಕಾರಿ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ನಂದಾ ಹಣಬರಟ್ಟಿ ತಿಳಿಸಿದರು.

ಶುಕ್ರವಾರ ಶಿರಹಟ್ಟಿಯ ತಹಸೀಲ್ದಾರ್ ಕಚೇರಿಯಲ್ಲಿ ರಾಜಕೀಯ ಪಕ್ಷಗಳ ಮುಖಂಡರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಶಿರಹಟ್ಟಿ ವಿಧಾನಸಭಾ ಕ್ಷೇತ್ರದಲ್ಲಿ ಶಿರಹಟ್ಟಿ ತಾಲೂಕಿನ 88, ಲಕ್ಷ್ಮೇಶ್ವರ ತಾಲೂಕಿನ 102 ಹಾಗೂ ಮುಂಡರಗಿ ತಾಲೂಕಿನ 62 ಸೇರಿ ಒಟ್ಟು 252 ಮತಗಟ್ಟೆಗಳಿದ್ದು, 2,30,268 ಮತದಾರರ ಪೈಕಿ 1,74,275 ಮತದಾರರ ಮಾಹಿತಿಯನ್ನು ಈಗಾಗಲೇ ಡಿಜಿಟಲೀಕರಣಗೊಳಿಸಲಾಗಿದೆ. ಇದರೊಂದಿಗೆ ಕ್ಷೇತ್ರದಲ್ಲಿ ಶೇ.75ಕ್ಕೂ ಅಧಿಕ ಪ್ರಗತಿ ಸಾಧಿಸಲಾಗಿದೆ ಎಂದು ತಿಳಿಸಿದರು.

ಇದಲ್ಲದೆ ಶಿರಹಟ್ಟಿ ತಾಲೂಕಿನ 13, ಲಕ್ಷ್ಮೇಶ್ವರ ತಾಲೂಕಿನ 22 ಹಾಗೂ ಮುಂಡರಗಿ ತಾಲೂಕಿನ 14 ಸೇರಿ ಒಟ್ಟು 49 ಮತಗಟ್ಟೆಗಳಲ್ಲಿ ಶೇ.100ರಷ್ಟು ಡಿಜಿಟಲೀಕರಣ ಕಾರ್ಯ ಪೂರ್ಣಗೊಂಡಿದೆ. ನಗರ ಪ್ರದೇಶಗಳಲ್ಲಿ ಕೆಲವು ತಾಂತ್ರಿಕ ಹಾಗೂ ಕಾರ್ಯನಿರ್ವಹಣೆಯ ಸಮಸ್ಯೆಗಳು ಕಂಡುಬಂದಿದ್ದು, ಅವುಗಳನ್ನು ಶೀಘ್ರ ಸರಿಪಡಿಸುವಂತೆ ಬೂತ್ ಮಟ್ಟದ ಅಧಿಕಾರಿಗಳಿಗೆ (ಬಿಎಲ್‌ಒ) ಸೂಚಿಸಲಾಗಿದೆ ಎಂದು ಹೇಳಿದರು.

ತಹಸೀಲ್ದಾರ್ ಕೆ. ರಾಘವೇಂದ್ರ ರಾವ್ ಮಾತನಾಡಿ, ಬಿಎಲ್‌ಒಗಳು ಮನೆ ಮನೆಗೆ ತೆರಳಿ ಈಗಾಗಲೇ ವಿತರಿಸಿರುವ ಎನ್ಯುಮರೇಷನ್ ಫಾರ್ಮ್‌ಗಳನ್ನು ಸಂಗ್ರಹಿಸುತ್ತಿದ್ದು, ಬಾಕಿ ಉಳಿದಿರುವ ಪ್ರಕ್ರಿಯೆಯನ್ನೂ ಶೀಘ್ರ ಪೂರ್ಣಗೊಳಿಸಲಾಗುವುದು. ಮತದಾರರ ಅನುಕೂಲಕ್ಕಾಗಿ ಫಾರ್ಮ್ ಸಲ್ಲಿಕೆಗೆ ಆಗಸ್ಟ್ 8ರವರೆಗೆ ಅವಧಿ ವಿಸ್ತರಿಸಲಾಗಿದೆ ಎಂದು ತಿಳಿಸಿದರು.

ಸಭೆಯಲ್ಲಿ ಲಕ್ಷ್ಮೇಶ್ವರ ತಹಸೀಲ್ದಾರ್ ಎಂ. ಧನಂಜಯ, ಮುಂಡರಗಿ ತಹಸೀಲ್ದಾರ್ ಯರಿಸ್ವಾಮಿ, ಕಾಂಗ್ರೆಸ್ ಮುಖಂಡ ಎಚ್.ಡಿ. ಮಾಗಡಿ, ಬಿಜೆಪಿ ಮುಖಂಡ ಶಂಕರ ಮರಾಠೆ, ಜೆಡಿಎಸ್ ಮುಖಂಡ ಶರಣಪ್ಪ ಹೂಗಾರ, ಕಾಂಗ್ರೆಸ್ ಮುಖಂಡ ಡಿ.ಡಿ. ಮೊರನಾಳ, ಎಸ್‌ಡಿಪಿಐ ಪ್ರತಿನಿಧಿಗಳು ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

ಬರದಿಂದ ಕಂಗೆಟ್ಟ ಮುಂಡರಗಿ: ಕೆರೆಗಳಿಗೆ ನೀರು ಹರಿಸಿ

0

ವಿಜಯಸಾಕ್ಷಿ ಸುದ್ದಿ, ಡಂಬಳ: ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟ ಹಿನ್ನೆಲೆಯಲ್ಲಿ ಮುಂಡರಗಿ ತಾಲೂಕಿನಲ್ಲಿ ಭೀಕರ ಬರ ಪರಿಸ್ಥಿತಿ ನಿರ್ಮಾಣವಾಗಿದ್ದು, ಶಿಂಗಟಾಲೂರ ಏತ ನೀರಾವರಿ ಯೋಜನೆಯ ಕಾಲುವೆಗಳ ಮೂಲಕ ಡಂಬಳ ಸೇರಿದಂತೆ ಸುತ್ತಮುತ್ತಲಿನ ಕೆರೆಗಳಿಗೆ ತಕ್ಷಣ ನೀರು ಹರಿಸಿ ರೈತರನ್ನು ಸಂಕಷ್ಟದಿಂದ ಪಾರು ಮಾಡಬೇಕು ಎಂದು ತಾಲೂಕು ಅಭಿವೃದ್ಧಿ ಹೋರಾಟ ಸಮಿತಿ ಅಧ್ಯಕ್ಷ ವೈ.ಎನ್. ಗೌಡರ ಆಗ್ರಹಿಸಿದರು.

ಡಂಬಳ ಹೋಬಳಿಯ ಡೋಣಿ ಗ್ರಾಮದ ಶಿಂಗಟಾಲೂರ ಏತ ನೀರಾವರಿ ಯೋಜನೆಯ ಕಾಲುವೆಯನ್ನು ಗುರುವಾರ ಪರಿಶೀಲಿಸಿದ ಬಳಿಕ ಮಾತನಾಡಿದ ಅವರು, ಸಾವಿರ ಕೋಟಿ ರೂಪಾಯಿಗೂ ಅಧಿಕ ವೆಚ್ಚದಲ್ಲಿ ಯೋಜನೆ ನಿರ್ಮಾಣವಾಗಿದ್ದರೂ ಮುಂಡರಗಿ ತಾಲೂಕಿನ ರೈತರ ಜಮೀನುಗಳಿಗೆ ನೀರು ತಲುಪಿಲ್ಲ. ಪರಿಣಾಮ ಭೂಮಿ ಹಸಿರಾಗುವ ಬದಲು ರೈತರು ವರ್ಷದಿಂದ ವರ್ಷಕ್ಕೆ ಬರದ ಸಂಕಷ್ಟ ಎದುರಿಸುತ್ತಿದ್ದಾರೆ ಎಂದು ಆರೋಪಿಸಿದರು.

ಹೂವಿನಹಡಗಲಿ ತಾಲೂಕಿನ ಬಲದಂಡೆ ಕಾಲುವೆ ಮೂಲಕ 2012ರಿಂದಲೇ ಸುಮಾರು 48 ಸಾವಿರ ಎಕರೆ ಪ್ರದೇಶಕ್ಕೆ ನೀರಾವರಿ ಒದಗಿಸಲಾಗಿದ್ದು, 22 ಕೆರೆಗಳನ್ನು ತುಂಬಿಸಲಾಗಿದೆ. ಆದರೆ ಡಂಬಳ, ತಾಮ್ರಗುಂಡಿ, ಜಂತಲಿ, ಶಿರೂರು, ಪೇಠಾಲೂರು ಸೇರಿದಂತೆ ಈ ಭಾಗದ ಕೆರೆಗಳಿಗೆ ನೀರು ಹರಿಸಲು ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ವಿಫಲರಾಗಿದ್ದಾರೆ ಎಂದು ದೂರಿದರು.

ತಾಮ್ರಗುಂಡಿ–ಮೇವುಂಡಿ ಮಧ್ಯೆ ಕಾಲುವೆ ಕಳಪೆ ಕಾಮಗಾರಿಯಿಂದ ಹಾನಿಗೊಳಗಾಗಿದ್ದು, ತಕ್ಷಣ ದುರಸ್ತಿ ಕೈಗೊಂಡು ಕೆರೆಗಳಿಗೆ ನೀರು ಹರಿಸಬೇಕು. ಮಳೆ ಕೈಕೊಟ್ಟಿರುವುದರಿಂದ ಬೆಳೆಗಳು ಒಣಗುತ್ತಿದ್ದು, ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ನೀರಾವರಿ ಕಲ್ಪಿಸುವ ಬದಲು ಸೂಕ್ಷ್ಮ ಹನಿ ನೀರಾವರಿ ಹೆಸರಿನಲ್ಲಿ ರಾಜಕಾರಣಿಗಳು, ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಲಾಭ ಪಡೆದಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು.

ಡಂಬಳ, ಪೇಠಾಲೂರು, ಕದಾಂಪುರ, ಹಿರೇವಡ್ಡಟ್ಟಿ ಸೇರಿದಂತೆ ಹಲವು ಗ್ರಾಮಗಳು ನೀರಾವರಿ ವ್ಯಾಪ್ತಿಗೆ ಬರಬೇಕಾಗಿದ್ದರೂ ಯೋಜನೆ ಸಮರ್ಪಕವಾಗಿ ಅನುಷ್ಠಾನಗೊಳ್ಳದ ಕಾರಣ ರೈತರು ತಮ್ಮ ಜಮೀನುಗಳನ್ನು ಸೌರ ವಿದ್ಯುತ್ ಹಾಗೂ ಗಾಳಿ ವಿದ್ಯುತ್ ಯೋಜನೆಗಳಿಗೆ ನೀಡುವ ಪರಿಸ್ಥಿತಿ ನಿರ್ಮಾಣವಾಗಿದೆ. ರೈತರು ಭೂಮಿಯ ಮಾಲೀಕರಾಗಿದ್ದರೂ ಇಂದು ಕೂಲಿ ಕಾರ್ಮಿಕರಾಗುವ ಸ್ಥಿತಿ ಎದುರಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಮುಂಡರಗಿ ತಾಲೂಕನ್ನು ತಕ್ಷಣ ಬರಪೀಡಿತ ಪ್ರದೇಶವೆಂದು ಘೋಷಿಸಿ, ಒಣ ಬೇಸಾಯ ಪ್ರದೇಶಕ್ಕೆ ಪ್ರತಿ ಹೆಕ್ಟೇರ್‌ಗೆ ₹13 ಸಾವಿರ ಹಾಗೂ ನೀರಾವರಿ ಪ್ರದೇಶಕ್ಕೆ ₹26 ಸಾವಿರ ಪರಿಹಾರ ನೀಡಬೇಕು. ಜೊತೆಗೆ ಕೆರೆಗಳಿಗೆ ನೀರು ಹರಿಸಿ, ಸೌರ ವಿದ್ಯುತ್ ಉತ್ಪಾದನೆಯ ಆದಾಯದಲ್ಲಿ ರೈತರಿಗೆ ಕನಿಷ್ಠ ಶೇ.25ರಷ್ಟು ಪಾಲು ನೀಡುವ ಕುರಿತು ಸರ್ಕಾರ ಚಿಂತನೆ ನಡೆಸಬೇಕು ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಕುಬೇರಪ್ಪ ಬಂಡಿ, ಚಂದ್ರು ಯಳಮಲಿ, ಮಂಜುನಾಥ ಸಂಜೀವಣ್ಣವರ, ಬಸವರಾಜ ಬಂಡಿ, ಉಮೇಶ ಹೆಗ್ಗಪ್ಪನವರ, ಎಚ್.ಬಿ. ಕುರಿ, ಶರಣಪ್ಪ ಕಂಬಳಿ, ಮೈಲಾರಪ್ಪ ಕವಲೂರ, ಹುಚ್ಚಪ್ಪ ಹಂದ್ರಾಳ, ಸಿದ್ದಪ್ಪ ಹಲವಾಗಲಿ, ಗುಡದಪ್ಪ ಶಿರಹಟ್ಟಿ, ಮಂಜಪ್ಪ ಶಿರಹಟ್ಟಿ, ಗುಡದಪ್ಪ ಕುರಿ, ಮುತ್ತಪ್ಪ ಕಲ್‌ವಂಗಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

“ಸಾವಿರ ಕೋಟಿ ರೂಪಾಯಿ ವೆಚ್ಚದ ಶಿಂಗಟಾಲೂರ ಏತ ನೀರಾವರಿ ಯೋಜನೆಯಿಂದ ಈ ಭಾಗದ ರೈತರಿಗೆ ನೀರು ಸಿಗದಿರುವುದು ದುರಂತ. ಕೆರೆಗಳಿಗೆ ತಕ್ಷಣ ನೀರು ಹರಿಸಿ, ಮುಂಡರಗಿ ತಾಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿ ರೈತರಿಗೆ ವಿಶೇಷ ಪರಿಹಾರ ನೀಡಬೇಕು.”

– ವೈ.ಎನ್. ಗೌಡರ, ಅಧ್ಯಕ್ಷರು, ತಾಲೂಕು ಅಭಿವೃದ್ಧಿ ಹೋರಾಟ ಸಮಿತಿ