ವಿಜಯಸಾಕ್ಷಿ ಸುದ್ದಿ, ಗದಗ: ಜಿಲ್ಲೆಯಲ್ಲಿ ಮುಂಗಾರು ಮಳೆ ಕೈಕೊಟ್ಟ ಪರಿಣಾಮ ಬೆಳೆಗಳು ಬಾಡುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಅವರು ಗುರುವಾರ ಗದಗ ಹಾಗೂ ರೋಣ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ರೈತರ ಹೊಲಗಳಲ್ಲೇ ಬೆಳೆಗಳ ಸ್ಥಿತಿಗತಿ ಪರಿಶೀಲಿಸಿದರು. ರೈತರೊಂದಿಗೆ ನೇರವಾಗಿ ಸಂವಾದ ನಡೆಸಿದ ಅವರು, ಆತಂಕ ಪಡಬಾರದು ಎಂದು ಧೈರ್ಯ ತುಂಬಿದರೆ, ಕೃಷಿ ಇಲಾಖೆ ಅಧಿಕಾರಿಗಳಿಗೆ ನಿರಂತರ ಬೆಳೆ ಮೇಲ್ವಿಚಾರಣೆ ನಡೆಸುವಂತೆ ಸೂಚನೆ ನೀಡಿದರು.
ಗದಗ ತಾಲೂಕಿನ ದುಂದೂರ ಕ್ರಾಸ್, ಗಂಗಿಮಡಿ–ಹಿರೇಹಂದಿಗೋಳ ರಸ್ತೆ, ಹರ್ಲಾಪೂರ ಹಾಗೂ ಕೋಟುಮುಚಗಿ ಗ್ರಾಮಗಳಲ್ಲಿ ಹೆಸರು, ಉದ್ದು, ಶೇಂಗಾ, ಮೆಕ್ಕೆಜೋಳ ಮತ್ತು ಹತ್ತಿ ಬೆಳೆಗಳ ಬೆಳವಣಿಗೆಯನ್ನು ಪರಿಶೀಲಿಸಿದ ಜಿಲ್ಲಾಧಿಕಾರಿಗಳು, ಬಳಿಕ ರೋಣ ತಾಲೂಕಿನ ನರೇಗಲ್ ಗ್ರಾಮದಲ್ಲಿ ಮಳೆ ಕೊರತೆಯಿಂದ ಒಣಗುತ್ತಿರುವ ಬೆಳೆಗಳನ್ನು ವೀಕ್ಷಿಸಿದರು.
ಹೊಲಗಳಲ್ಲೇ ರೈತರ ಸಮಸ್ಯೆ ಆಲಿಸಿದ ಜಿಲ್ಲಾಧಿಕಾರಿಗಳು, ಮಳೆ ಕೊರತೆಯಿಂದ ಉಂಟಾಗುತ್ತಿರುವ ಹಾನಿಯನ್ನು ದಾಖಲಿಸಿ ರೈತರಿಗೆ ತಕ್ಷಣ ತಾಂತ್ರಿಕ ಸಲಹೆ ಹಾಗೂ ಅಗತ್ಯ ನೆರವು ಒದಗಿಸುವಂತೆ ಕೃಷಿ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಹವಾಮಾನ ವೈಪರೀತ್ಯ, ಕೀಟ ಹಾಗೂ ರೋಗಬಾಧೆ ಕಂಡುಬಂದರೆ ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ಪರಿಹಾರ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ಕೃಷಿ ಜಂಟಿ ನಿರ್ದೇಶಕಿ ಚೇತನಾ ಪಾಟೀಲ ಮಾಹಿತಿ ನೀಡಿ, ಜಿಲ್ಲೆಯಲ್ಲಿ 3,13,719 ಹೆಕ್ಟೇರ್ ಬಿತ್ತನೆ ಗುರಿಯಲ್ಲಿ ಇದುವರೆಗೆ 2,57,401 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆಯಾಗಿದೆ. ಜೂನ್ 1ರಿಂದ ಜುಲೈ 16ರವರೆಗೆ 121.4 ಮಿ.ಮೀ. ವಾಡಿಕೆ ಮಳೆಯ ಬದಲಿಗೆ ಕೇವಲ 82.50 ಮಿ.ಮೀ. ಮಳೆಯಾಗಿದ್ದು, ಶೇ.32.04ರಷ್ಟು ಮಳೆ ಕೊರತೆ ದಾಖಲಾಗಿದೆ ಎಂದು ತಿಳಿಸಿದರು.
ಜುಲೈ 22ರವರೆಗೆ ಬೆಳೆ ವಿಮೆ ನೋಂದಣಿ ಅವಕಾಶ
ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ಕರ್ನಾಟಕ ರೈತ ಸುರಕ್ಷಾ–ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ ಅಡಿಯಲ್ಲಿ ಹೆಸರು ಹಾಗೂ ಹತ್ತಿ ಬೆಳೆಗಳಿಗೆ ಜುಲೈ 22ರವರೆಗೆ ಬೆಳೆ ವಿಮೆ ನೋಂದಾಯಿಸಿಕೊಳ್ಳಲು ಅವಕಾಶವಿದೆ. ಅರ್ಹ ರೈತರು ಈ ಸೌಲಭ್ಯದ ಸದುಪಯೋಗ ಪಡೆಯುವಂತೆ ಜಿಲ್ಲಾಧಿಕಾರಿ ಮನವಿ ಮಾಡಿದರು.
“ರೈತರು ಯಾವುದೇ ರೀತಿಯ ಸಂಕಷ್ಟಕ್ಕೆ ಸಿಲುಕದಂತೆ ಅಧಿಕಾರಿಗಳು ನಿರಂತರವಾಗಿ ಹೊಲಗಳಿಗೆ ಭೇಟಿ ನೀಡಿ ಬೆಳೆಗಳ ಸ್ಥಿತಿಗತಿ ಪರಿಶೀಲಿಸಬೇಕು. ರೈತರಿಗೆ ಅಗತ್ಯ ತಾಂತ್ರಿಕ ಸಲಹೆ, ಇಲಾಖೆಯ ಸೌಲಭ್ಯ ಹಾಗೂ ಮಾರ್ಗದರ್ಶನವನ್ನು ಸಮಯಕ್ಕೆ ತಲುಪಿಸುವುದು ಅಧಿಕಾರಿಗಳ ಜವಾಬ್ದಾರಿಯಾಗಿದೆ.”
– ಸಿ.ಎನ್. ಶ್ರೀಧರ್, ಜಿಲ್ಲಾಧಿಕಾರಿ, ಗದಗ

