Home Blog

ಮಲೆನಾಡಿನಲ್ಲಿ ಮಳೆ ಆರ್ಭಟ; ಬಿಸಿಲೆ ಘಾಟ್‌ನಲ್ಲಿ ಮರ ಬಿದ್ದು ಸಂಚಾರ ಸ್ಥಗಿತ!

0

ಹಾಸನ: ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆಯ ಆರ್ಭಟ ಮುಂದುವರಿದಿದ್ದು, ಬಿಸಿಲೆ ಘಾಟ್‌ ಪ್ರದೇಶದಲ್ಲಿ ಭಾರೀ ಗಾಳಿ-ಮಳೆಯಿಂದ ಮರಗಳು ಧರೆಗುರುಳಿವೆ. ಪರಿಣಾಮ ಬಿಸಿಲೆ-ಸುಬ್ರಹ್ಮಣ್ಯ ಮಾರ್ಗದಲ್ಲಿ ಸಂಚಾರ ಸ್ಥಗಿತಗೊಂಡಿದೆ.

ಬಿಸಿಲೆ ಘಾಟ್‌ ಮಾರ್ಗದ ರಾಜ್ಯ ಹೆದ್ದಾರಿಯಲ್ಲಿ ಮರಗಳು ರಸ್ತೆಗೆ ಅಡ್ಡಲಾಗಿ ಬಿದ್ದಿದ್ದು, ವಾಹನಗಳ ಸಂಚಾರಕ್ಕೆ ತೀವ್ರ ಅಡಚಣೆ ಉಂಟಾಗಿದೆ. ಮರ ಬಿದ್ದ ಹಿನ್ನೆಲೆಯಲ್ಲಿ ಸಾರಿಗೆ ಬಸ್‌ಗಳು ಸೇರಿದಂತೆ ನೂರಾರು ವಾಹನಗಳು ರಸ್ತೆಯಲ್ಲೇ ಸಿಲುಕಿಕೊಂಡಿವೆ.

ಮಧ್ಯಾಹ್ನದಿಂದಲೇ ವಾಹನಗಳು ಹಾಗೂ ಸಾರಿಗೆ ಬಸ್‌ಗಳು ಮುಂದೆ ಸಾಗಲಾಗದೆ ನಿಂತಲ್ಲೇ ನಿಂತಿದ್ದು, ಪ್ರಯಾಣಿಕರು ಪರದಾಡುವಂತಾಗಿದೆ. ದಾರಿ ಮಧ್ಯೆ ಸಿಲುಕಿದ ಪ್ರವಾಸಿಗರು ಹಾಗೂ ಪ್ರಯಾಣಿಕರು ಗಂಟೆಗಟ್ಟಲೆ ಕಾಯುವ ಪರಿಸ್ಥಿತಿ ನಿರ್ಮಾಣವಾಗಿದೆ.

ರಸ್ತೆಗೆ ಬಿದ್ದಿರುವ ಮರಗಳನ್ನು ತೆರವುಗೊಳಿಸುವ ಕಾರ್ಯ ವಿಳಂಬವಾಗುತ್ತಿರುವುದಕ್ಕೆ ಪ್ರಯಾಣಿಕರು ಹಾಗೂ ವಾಹನ ಸವಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಕ್ಷಣ ಮರಗಳನ್ನು ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಡುವಂತೆ ಅವರು ಆಗ್ರಹಿಸಿದ್ದಾರೆ.

ಮಲೆನಾಡು ಭಾಗದಲ್ಲಿ ಮಳೆ ಮುಂದುವರಿದಿರುವ ಹಿನ್ನೆಲೆಯಲ್ಲಿ, ಘಾಟ್‌ ಪ್ರದೇಶಗಳಲ್ಲಿ ಸಂಚರಿಸುವ ವಾಹನ ಸವಾರರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

3 ದಿನ ಮೊದಲೇ ವಿಧಾನಮಂಡಲ ಅಧಿವೇಶನ ಅಂತ್ಯ; ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ!

0

ಬೆಂಗಳೂರು: ವಾಲ್ಮೀಕಿ ನಿಗಮ ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳು ನಡೆಸಿದ ತೀವ್ರ ಪ್ರತಿಭಟನೆ ನಡುವೆಯೇ ಕರ್ನಾಟಕ ವಿಧಾನಮಂಡಲದ ಮಳೆಗಾಲದ ಅಧಿವೇಶನ ನಿಗದಿತ ಅವಧಿಗೆ ಮೂರು ದಿನ ಮುಂಚಿತವಾಗಿಯೇ ಅಂತ್ಯಗೊಂಡಿದೆ.

ಆಗಸ್ಟ್ 13ರಿಂದ 27ರವರೆಗೆ ಅಧಿವೇಶನ ನಡೆಸಲು ತೀರ್ಮಾನಿಸಲಾಗಿತ್ತು. ಆದರೆ, ಆಗಸ್ಟ್ 24ರಂದೇ ವಿಧಾನಸಭೆ ಹಾಗೂ ವಿಧಾನ ಪರಿಷತ್ ಕಲಾಪಗಳನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ.

‘ವಿಪಕ್ಷಗಳಿಗೆ ಹೆದರಿ ಸರ್ಕಾರ ಓಡಿದೆ’:

ಅಧಿವೇಶನವನ್ನು ಅವಧಿಗೂ ಮುನ್ನವೇ ಅಂತ್ಯಗೊಳಿಸಿರುವ ರಾಜ್ಯ ಸರ್ಕಾರದ ವಿರುದ್ಧ ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. 20-30 ವರ್ಷಗಳಲ್ಲಿ ಮೊದಲ ಬಾರಿಗೆ ವಿಪಕ್ಷಗಳಿಗೆ ಹೆದರಿ ಸರ್ಕಾರ ಓಡಿ ಹೋಗಿದೆ ಎಂದು ಅವರು ಆರೋಪಿಸಿದ್ದಾರೆ.

ಸಭಾಧ್ಯಕ್ಷರು ಸದನವನ್ನು ಸರಿಯಾದ ರೀತಿಯಲ್ಲಿ ನಡೆಸಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ ಅಶೋಕ್, ವಾಲ್ಮೀಕಿ ನಿಗಮದ ಹಣ ದುರುಪಯೋಗದ ವಿಚಾರದಲ್ಲಿ ಸರ್ಕಾರ ಉತ್ತರ ನೀಡಬೇಕು ಎಂದು ಆಗ್ರಹಿಸಿದರು. ದಲಿತರ ಹಣವನ್ನು ಲೂಟಿ ಮಾಡಲಾಗಿದೆ ಎಂದು ಆರೋಪಿಸಿದ ಅವರು, ಆ ಹಣವನ್ನು ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿದರು.

‘ಭ್ರಷ್ಟಾಚಾರ ಬಯಲಾಗುವ ಭಯ’:

ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಕೂಡ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಹಿಂಬಾಗಿಲಿನಿಂದ ಓಡಿ ಹೋಗಿದೆ ಎಂದು ಆರೋಪಿಸಿದ ಅವರು, ಭ್ರಷ್ಟಾಚಾರ ಬಯಲಾಗುವ ಭಯದಿಂದ ಸಚಿವ ಬಿ. ನಾಗೇಂದ್ರ ಅವರನ್ನು ಸರ್ಕಾರ ರಕ್ಷಿಸುತ್ತಿದೆ ಎಂದು ಆರೋಪಿಸಿದರು.

ವಾಲ್ಮೀಕಿ ನಿಗಮದ ಹಣದ ದುರುಪಯೋಗದ ಕುರಿತು ಸರ್ಕಾರವೇ ₹85 ಕೋಟಿ ಹಗರಣ ಎಂದು ಒಪ್ಪಿಕೊಂಡಿತ್ತು. ಇಷ್ಟಾದರೂ ಸರ್ಕಾರ ಯಾವುದೇ ಕ್ರಮ ಕೈಗೊಳ್ಳದೆ ಭಂಡತನದಿಂದ ವರ್ತಿಸುತ್ತಿದೆ ಎಂದು ವಿಜಯೇಂದ್ರ ಟೀಕಿಸಿದರು.

ರಾಜ್ಯಪಾಲರಿಗೆ ಬಿಜೆಪಿ ದೂರು:

ಇನ್ನು ಸಚಿವ ಬಿ. ನಾಗೇಂದ್ರ ವಿಚಾರವಾಗಿ ಬಿಜೆಪಿ ನಾಯಕರು ರಾಜ್ಯಪಾಲರಿಗೆ ದೂರು ಸಲ್ಲಿಸಿದ್ದಾರೆ. ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ ಶಾಸಕರು ವಿಧಾನಸೌಧದಿಂದ ಲೋಕಭವನದವರೆಗೆ ಪಾದಯಾತ್ರೆ ನಡೆಸಿದರು.

ಬಳಿಕ ರಾಜ್ಯಪಾಲರನ್ನು ಭೇಟಿ ಮಾಡಿ ವಾಲ್ಮೀಕಿ ನಿಗಮ ಹಗರಣ ಹಾಗೂ ಸಚಿವ ನಾಗೇಂದ್ರ ವಿಚಾರದಲ್ಲಿ ದೂರು ಸಲ್ಲಿಸಿದರು. ಈ ವೇಳೆ ಜೆಡಿಎಸ್ ಶಾಸಕರೂ ಉಪಸ್ಥಿತರಿದ್ದರು.

ವಾಲ್ಮೀಕಿ ನಿಗಮದ ಹಣ ದುರುಪಯೋಗದ ವಿಚಾರದಲ್ಲಿ ಸರ್ಕಾರ ಮತ್ತು ವಿಪಕ್ಷಗಳ ನಡುವಿನ ರಾಜಕೀಯ ಸಂಘರ್ಷ ತೀವ್ರಗೊಂಡಿರುವ ಬೆನ್ನಲ್ಲೇ ವಿಧಾನಮಂಡಲ ಅಧಿವೇಶನ ಅವಧಿಗೂ ಮುನ್ನವೇ ಅಂತ್ಯಗೊಂಡಿದೆ. ಈ ಬೆಳವಣಿಗೆ ರಾಜ್ಯ ರಾಜಕಾರಣದಲ್ಲಿ ಮತ್ತಷ್ಟು ಚರ್ಚೆಗೆ ಕಾರಣವಾಗಿದೆ.

ಟಿಪ್ಪು ಸುಲ್ತಾನ್ ಕಟೌಟ್‌ಗೆ ಪಾಕಿಸ್ತಾನ ಪರ ಹಾಡು ಬಳಸಿ ವಿಡಿಯೋ ಪೋಸ್ಟ್; ಓರ್ವ ಅರೆಸ್ಟ್!

0

ಚಿಕ್ಕಮಗಳೂರು: ಟಿಪ್ಪು ಸುಲ್ತಾನ್ ಕಟೌಟ್‌ಗೆ ಪಾಕಿಸ್ತಾನ ಪರ ಹಾಡು ಬಳಸಿ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹರಿಬಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರು ಪೊಲೀಸರು ಓರ್ವನನ್ನು ಬಂಧಿಸಿದ್ದಾರೆ.

ಬಂಧಿತನನ್ನು ರೋಷನ್ ಎಂದು ಗುರುತಿಸಲಾಗಿದೆ. ಟಿಪ್ಪು ಸುಲ್ತಾನ್ ಕಟೌಟ್‌ ಇರುವ ವಿಡಿಯೋಗೆ ದೇಶವಿರೋಧಿ ಹಾಡು ಅಳವಡಿಸಿ, ಅದನ್ನು ವಾಟ್ಸಾಪ್, ಇನ್‌ಸ್ಟಾಗ್ರಾಂ ಹಾಗೂ ಫೇಸ್‌ಬುಕ್‌ಗಳಲ್ಲಿ ವ್ಯಾಪಕವಾಗಿ ಹಂಚಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದರು. ಶಾಂತಿ ಮತ್ತು ಸೌಹಾರ್ದತೆಗೆ ಧಕ್ಕೆ ತರುವ ಉದ್ದೇಶದಿಂದ ವಿಡಿಯೋ ಹಂಚಿಕೊಳ್ಳಲಾಗಿದೆ ಎಂಬ ಆರೋಪದಡಿ ಕ್ರಮ ಕೈಗೊಳ್ಳಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಒಟ್ಟು 7 ಮಂದಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಪೈಕಿ ರೋಷನ್‌ನನ್ನು ಬಂಧಿಸಲಾಗಿದ್ದು, ಅಪ್ರಾಪ್ತರು ಸೇರಿದಂತೆ ಉಳಿದ ಆರು ಮಂದಿಯನ್ನು ಪೊಲೀಸರು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.

ವಿಡಿಯೋವನ್ನು ಯಾರು ಸೃಷ್ಟಿಸಿದರು, ಹಾಡನ್ನು ಯಾರು ಅಳವಡಿಸಿದರು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಯಾರು ಮೊದಲು ಹಂಚಿಕೊಂಡರು ಎಂಬುದರ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಪ್ರಕರಣದ ಹಿನ್ನೆಲೆ ಹಾಗೂ ಆರೋಪಿಗಳ ಪಾತ್ರದ ಬಗ್ಗೆ ಹೆಚ್ಚಿನ ಮಾಹಿತಿ ತನಿಖೆ ಬಳಿಕ ತಿಳಿದುಬರಬೇಕಿದೆ.

ಬೆಂಗಳೂರು ಪಾರ್ಕಿಂಗ್ ನಿಯಮ: ಶುಲ್ಕ ವಿಧಿಸದಂತೆ ಸಿಎಂಗೆ ರಾಮಲಿಂಗಾರೆಡ್ಡಿ ಪತ್ರ!

0

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ ಜಾರಿಗೊಳಿಸಲು ಮುಂದಾಗಿರುವ ಹೊಸ ಪಾರ್ಕಿಂಗ್ ನಿಯಮಗಳ ಕುರಿತು ಸಾರ್ವಜನಿಕರಿಂದ ಆಕ್ಷೇಪ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಮನೆ ಮುಂದೆ ವಾಹನ ನಿಲುಗಡೆಗೆ ಶುಲ್ಕ ವಿಧಿಸದಂತೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಪತ್ರ ಬರೆದಿದ್ದಾರೆ.

ಬೆಂಗಳೂರು ನಗರದಲ್ಲಿ ರಸ್ತೆ ಬದಿ ವಾಹನ ನಿಲುಗಡೆಗೆ ಸಂಬಂಧಿಸಿದಂತೆ ಹೊಸ ನಿಯಮಗಳನ್ನು ಜಾರಿಗೆ ತರಲು ಪ್ರಸ್ತಾವಿಸಲಾಗಿದೆ. ಇದರ ಭಾಗವಾಗಿ ವಾರ್ಷಿಕ ₹15 ಸಾವಿರದಿಂದ ₹25 ಸಾವಿರದವರೆಗೆ ಪಾರ್ಕಿಂಗ್ ಶುಲ್ಕ ವಿಧಿಸುವ ಪ್ರಸ್ತಾವನೆ ಕುರಿತು ಸಾರ್ವಜನಿಕರಿಂದ ವಿವಿಧ ಅಭಿಪ್ರಾಯಗಳು ಹಾಗೂ ಆತಂಕಗಳು ವ್ಯಕ್ತವಾಗುತ್ತಿವೆ.

ನಗರದಲ್ಲಿ ವಾಹನಗಳ ಸಂಖ್ಯೆ ನಿರಂತರವಾಗಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಸ್ತೆ ಬದಿ ಪಾರ್ಕಿಂಗ್‌ನಿಂದ ಉಂಟಾಗುತ್ತಿರುವ ಸಂಚಾರ ಸಮಸ್ಯೆಯನ್ನು ನಿಯಂತ್ರಿಸುವ ಅಗತ್ಯವಿದೆ ಎಂಬುದನ್ನು ರಾಮಲಿಂಗಾರೆಡ್ಡಿ ಒಪ್ಪಿಕೊಂಡಿದ್ದಾರೆ. ಆದರೆ, ಪಾರ್ಕಿಂಗ್ ನಿಯಮ ರೂಪಿಸುವ ಸಂದರ್ಭದಲ್ಲಿ ಸಾಮಾನ್ಯ ನಾಗರಿಕರ ಆರ್ಥಿಕ ಪರಿಸ್ಥಿತಿಯನ್ನೂ ಪರಿಗಣಿಸುವುದು ಅತ್ಯಂತ ಮುಖ್ಯ ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ.

ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆ ಸೇರಿದಂತೆ ವಿವಿಧ ಕಾರಣಗಳಿಂದ ಮಧ್ಯಮ ವರ್ಗ ಹಾಗೂ ಸಾಮಾನ್ಯ ಕುಟುಂಬಗಳು ಆರ್ಥಿಕ ಒತ್ತಡ ಎದುರಿಸುತ್ತಿವೆ. ಅಡುಗೆ ಅನಿಲ, ಪೆಟ್ರೋಲ್, ಡೀಸೆಲ್, ಜಿಎಸ್‌ಟಿ ಹಾಗೂ ಟೋಲ್ ಸೇರಿದಂತೆ ಹಲವು ವೆಚ್ಚಗಳು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ವಾಹನ ಹೊಂದಿರುವ ಕುಟುಂಬಗಳ ಮೇಲೆ ಹೆಚ್ಚುವರಿಯಾಗಿ ಪಾರ್ಕಿಂಗ್ ಶುಲ್ಕ ವಿಧಿಸುವುದು ಮತ್ತಷ್ಟು ಆರ್ಥಿಕ ಹೊರೆಯಾಗಬಹುದು ಎಂದು ಸಚಿವರು ಹೇಳಿದ್ದಾರೆ.

ಕರ್ನಾಟಕ ಸರ್ಕಾರವು ಸಾಮಾನ್ಯ ಜನರ ಜೀವನಮಟ್ಟ ಸುಧಾರಿಸಲು ಹಾಗೂ ಆರ್ಥಿಕವಾಗಿ ನೆರವಾಗಲು ಹಲವು ಜನಪರ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದೆ. ಇಂತಹ ಸಂದರ್ಭದಲ್ಲಿ ನಗರ ಪ್ರದೇಶಗಳಲ್ಲಿ ವಾಸಿಸುವ ಕುಟುಂಬಗಳ ಮೇಲೆ ಮತ್ತೊಂದು ಅನಿವಾರ್ಯ ಆರ್ಥಿಕ ಹೊರ ಬೀಳದಂತೆ ಎಚ್ಚರಿಕೆ ವಹಿಸುವ ಅಗತ್ಯವಿದೆ ಎಂದು ರಾಮಲಿಂಗಾರೆಡ್ಡಿ ಅಭಿಪ್ರಾಯಪಟ್ಟಿದ್ದಾರೆ.

ಬೆಂಗಳೂರು ನಗರದಲ್ಲಿ ದೊಡ್ಡ ನಿವೇಶನ ಅಥವಾ ಸ್ವಂತ ಮನೆ ಹೊಂದಿರುವ ಕೆಲವರು ತಮ್ಮ ವಾಹನಗಳನ್ನು ಮನೆಯ ಆವರಣದಲ್ಲೇ ನಿಲ್ಲಿಸಬಹುದು. ಆದರೆ, ಬಹುತೇಕ ಮಧ್ಯಮ ವರ್ಗದ ಕುಟುಂಬಗಳು ಸೀಮಿತ ಜಾಗದ ಮನೆಗಳು ಅಥವಾ ಅಪಾರ್ಟ್‌ಮೆಂಟ್‌ಗಳಲ್ಲಿ ವಾಸಿಸುತ್ತಿದ್ದು, ತಮ್ಮ ವಾಹನಗಳನ್ನು ಮನೆಯೊಳಗೆ ನಿಲ್ಲಿಸಲು ಅಗತ್ಯವಾದ ಸ್ಥಳದ ಕೊರತೆಯನ್ನು ಎದುರಿಸುತ್ತಿದ್ದಾರೆ.

ಹೊಸ ಕಟ್ಟಡ ನಿರ್ಮಾಣದ ನಿಯಮಗಳಲ್ಲಿ ಪಾರ್ಕಿಂಗ್ ವ್ಯವಸ್ಥೆಗೆ ಹೆಚ್ಚಿನ ಒತ್ತು ನೀಡುತ್ತಿರುವುದು ಸ್ವಾಗತಾರ್ಹ. ಆದರೆ, ಬೆಂಗಳೂರಿನ ಹಳೆಯ ಕಟ್ಟಡಗಳು ಹಾಗೂ ಹಳೆಯ ವಸತಿ ಪ್ರದೇಶಗಳಲ್ಲಿ ಇಂದಿನ ವಾಹನಗಳ ಸಂಖ್ಯೆಗೆ ಅನುಗುಣವಾಗಿ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸುವುದು ಬಹುತೇಕ ಸಂದರ್ಭಗಳಲ್ಲಿ ಸಾಧ್ಯವಾಗುವುದಿಲ್ಲ ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ.

ಹೀಗಾಗಿ ಪಾರ್ಕಿಂಗ್ ಶುಲ್ಕದ ವಿಚಾರದಲ್ಲಿ ಆತುರದ ನಿರ್ಧಾರ ಕೈಗೊಳ್ಳದೆ, ಬೆಂಗಳೂರಿನ ಶಾಸಕರು ಹಾಗೂ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಚರ್ಚಿಸುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ರಾಮಲಿಂಗಾರೆಡ್ಡಿ ಮನವಿ ಮಾಡಿದ್ದಾರೆ.

 

ಬೆಂಗಳೂರಿನ ಖಾಲಿ ನಿವೇಶನಗಳಿಗೆ ನೋಟಿಸ್‌: ತ್ವರಿತ ಸ್ವಚ್ಛತಾ ಕಾರ್ಯಕ್ಕೆ ಕೃಷ್ಣ ಬೈರೇಗೌಡ ಸೂಚನೆ

0

ಬೆಂಗಳೂರು: ನಗರದ ಐದೂ ನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಸ್ವಚ್ಛಗೊಳಿಸಬೇಕಾದ ಖಾಲಿ ನಿವೇಶನಗಳನ್ನು ಗುರುತಿಸಿ, ಮಾಲೀಕರಿಗೆ ನೋಟಿಸ್‌ ನೀಡಿ ತ್ವರಿತವಾಗಿ ಸ್ವಚ್ಛತಾ ಕಾರ್ಯ ಕೈಗೊಳ್ಳುವಂತೆ ಗ್ರೇಟರ್‌ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಖಾಲಿ ನಿವೇಶನಗಳ ಸ್ವಚ್ಛತಾ ಕಾರ್ಯಕ್ಕೆ ಸಂಬಂಧಿಸಿದಂತೆ ಸೋಮವಾರ ನಡೆದ ವರ್ಚುವಲ್‌ ಸಭೆಯಲ್ಲಿ ಮಾತನಾಡಿದ ಸಚಿವರು, ನಿವೇಶನಗಳ ಮಾಲೀಕರು ಸ್ವತಃ ಸ್ವಚ್ಛತಾ ಕಾರ್ಯ ಕೈಗೊಳ್ಳಲು ಆಗಸ್ಟ್‌ 22ರವರೆಗೆ ಗಡುವು ನೀಡಲಾಗಿತ್ತು. ಆದರೆ, ಕೆಲವೇ ಪ್ರದೇಶಗಳಲ್ಲಿ ಶೇ.20ರಷ್ಟು ನಿವೇಶನಗಳ ಮಾಲೀಕರು ಮಾತ್ರ ಸ್ವಚ್ಛತಾ ಕಾರ್ಯ ನಡೆಸಿದ್ದಾರೆ ಎಂದು ತಿಳಿಸಿದ್ದಾರೆ.

ಹೀಗಾಗಿ ನಗರದ ಎಲ್ಲಾ ಖಾಲಿ ನಿವೇಶನಗಳಲ್ಲೂ ಪರಿಣಾಮಕಾರಿಯಾಗಿ ಸ್ವಚ್ಛತಾ ಕಾರ್ಯ ಕೈಗೊಳ್ಳಬೇಕು. ಈ ನಿಟ್ಟಿನಲ್ಲಿ ಐದೂ ನಗರ ಪಾಲಿಕೆಗಳು ಅಗತ್ಯ ಸಿದ್ಧತೆ ಮಾಡಿಕೊಂಡು ಕಾರ್ಯಾಚರಣೆ ನಡೆಸಬೇಕು. ಸ್ವಚ್ಛತಾ ಕಾರ್ಯಕ್ಕೆ ತಗಲುವ ವೆಚ್ಚವನ್ನು ಸಂಬಂಧಪಟ್ಟ ಆಸ್ತಿ ಮಾಲೀಕರಿಂದ ಆಸ್ತಿ ತೆರಿಗೆ ಮೂಲಕ ವಸೂಲಿ ಮಾಡಬೇಕು ಎಂದು ಸೂಚಿಸಿದ್ದಾರೆ.

ನಿವೇಶನಗಳ ಗುರುತಿಸಿ ನೋಟಿಸ್‌ ನೀಡಲು ಸೂಚನೆ

ಸ್ವಚ್ಛತಾ ಕಾರ್ಯ ಅಗತ್ಯವಿರುವ ಖಾಲಿ ನಿವೇಶನಗಳನ್ನು ಕಂದಾಯ ಅಧಿಕಾರಿಗಳು ಗುರುತಿಸಿ ಪಟ್ಟಿ ಮಾಡಬೇಕು. ಪಟ್ಟಿ ಮಾಡಲಾದ ನಿವೇಶನಗಳಿಗೆ ಮಾರ್ಷಲ್‌ಗಳು ಹಾಗೂ ಕಿರಿಯ ಆರೋಗ್ಯ ಪರಿವೀಕ್ಷಕರು ನೋಟಿಸ್‌ ಅಂಟಿಸಬೇಕು.

ಬಳಿಕ ನಗರ ಪಾಲಿಕೆಗಳ ವತಿಯಿಂದಲೇ ಖಾಲಿ ನಿವೇಶನಗಳ ಸ್ವಚ್ಛತಾ ಕಾರ್ಯ ಕೈಗೊಳ್ಳಬೇಕು ಎಂದು ಕೃಷ್ಣ ಬೈರೇಗೌಡ ನಿರ್ದೇಶನ ನೀಡಿದ್ದಾರೆ. ಇದೇ ಗುರುವಾರದಿಂದ ಎಲ್ಲಾ ನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಖಾಲಿ ನಿವೇಶನಗಳ ಸ್ವಚ್ಛತಾ ಕಾರ್ಯ ಆರಂಭಿಸಬೇಕು. ಮುಂದಿನ ಸೋಮವಾರದಿಂದ ಕಾರ್ಯಾಚರಣೆಯನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ನಗರದಾದ್ಯಂತ ಖಾಲಿ ನಿವೇಶನಗಳ ಸ್ವಚ್ಛತೆಗಾಗಿ ಜೆಸಿಬಿ, ಟಿಪ್ಪರ್‌, ಟ್ರ್ಯಾಕ್ಟರ್‌ ಹಾಗೂ ಅಗತ್ಯ ಸಿಬ್ಬಂದಿ ಸೇರಿದಂತೆ ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಸ್ವಚ್ಛತಾ ಕಾರ್ಯ ಕೈಗೊಳ್ಳಲು ಅಗತ್ಯವಿರುವ ಏಜೆನ್ಸಿಗಳನ್ನು ಗುರುತಿಸಿ ಕ್ರಮ ಕೈಗೊಳ್ಳುವಂತೆಯೂ ಸಚಿವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ನೈಸ್ ಕಂಪನಿ ಖರೀದಿ ಮಾಡುತ್ತಿರುವುದು ಸಿಎಂ ಡಿ.ಕೆ.ಶಿವಕುಮಾರ್! ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ

0

ಬೆಂಗಳೂರು:  ರಾಜ್ಯದ ಈಗಿನ ಮುಖ್ಯಮಂತ್ರಿಯೇ ನೈಸ್ ಕಂಪನಿಯನ್ನು ಖರೀದಿ (ಟೇಕ್ ಓವರ್) ಮಾಡಲು ಹೊರಟಿರುವ ವ್ಯಕ್ತಿ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಸ್ಪೋಟಕ ಸಂಗತಿಯನ್ನು ಬಹಿರಂಗಪಡಿಸಿದರು. ನನಗಿರುವ ಮಾಹಿತಿ ಪ್ರಕಾರ ಬೇನಾಮಿ ಕಂಪನಿಗಳ ಮೂಲಕ ಈ ಮುಖ್ಯಮಂತ್ರಿಯೇ ನೈಸ್ ಕಂಪನಿಯನ್ನು ಖರೀದಿ ಮಾಡಲು ಹೊರಟಿದ್ದಾರೆ. ರೈತರಿಗೊಂದು ಕಾನೂನು, ಮುಖ್ಯಮಂತ್ರಿಗೆ ಇನ್ನೊಂದು ಕಾನೂನು ಇದೆಯಾ ಈ ರಾಜ್ಯದಲ್ಲಿ? ಬಿಎಂಐಸಿ ಯೋಜನೆ ಹೆಸರಲ್ಲಿ ಸಾವಿರಾರು ಎಕರೆ ಭೂಮಿಯನ್ನು ಲೂಟಿ ಹೊಡೆಲು ಸಂಚು ರೂಪಿಸಿದ್ದಾರೆ. ನಾನಿಲ್ಲಿ ಕೂತು ಸಂತೆಭಾಷಣ ಮಾಡುತ್ತಿಲ್ಲ. ಮುಂದಿನ ವಾರ ದಾಖಲೆ ಸಮೇತ ಹೇಳುತ್ತೇನೆ ಎಂದು ಸಚಿವ ಕುಮಾರಸ್ವಾಮಿ ಅವರು ಹೇಳಿದರು.

ಜೆಡಿಎಸ್ ಕೇಂದ್ರ ಕಚೇರಿಯಲ್ಲಿ ಯುವಕರು ಮತ್ತು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಸಚಿವ ಕುಮಾರಸ್ವಾಮಿ ಅವರು; ರಾಜ್ಯದ ಈಗಿನ ಮುಖ್ಯಮಂತ್ರಿ ನೈಸ್ ಅಕ್ರಮಗಳಲ್ಲಿ ನೇರವಾಗಿ ಶಾಮೀಲಾಗಿದ್ದಾರೆ. ಈ ಮುಖ್ಯಮಂತ್ರಿಯೇ ರಾಷ್ಟ್ರದಲ್ಲಿಯೇ ಅತಿ ದೊಡ್ಡ ಭೂ ಲೂಟಿಯ ಮಹಾನಾಯಕ ಎಂದು ಅವರು ಗಂಭೀರ ಆರೋಪ ಮಾಡಿದರು.

ವಿಧಾನಸೌಧದ ಮೂರನೇ ಮಾಡಿಯಲ್ಲಿ ಕೂತು ಈ ಮುಖ್ಯಮಂತ್ರಿ ನೇರ ವ್ಯವಹಾರಕ್ಕೆ ಇಳಿದಿದ್ದಾರೆ. ನೈಸ್ ಕಂಪನಿಯನ್ನು ಯಾರು ಟೇಕ್ ಓವರ್ ಮಾಡುತ್ತಿದ್ದಾರೆ ಎಂಬುದನ್ನು ತಾಕತ್ತಿದ್ದರೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಜನತೆಯ ಮುಂದೆ ಹೇಳಲಿ. ಯೋಜನೆಯನ್ನು ಯಾರು ಸ್ವಾಧೀನ ಮಾಡಿಕೊಳ್ಳುತ್ತಿದ್ದಾರೆ?ಬೇನಾಮಿ ಕಂಪನಿಗಳ ಮೂಲಕ ಯಾರು ಯಾರು ಈ ವ್ಯವಹಾರಕ್ಕೆ ಇಳಿದಿದ್ದಾರೆ ಎಂಬ ಮಾಹಿತಿ ನನಗಿದೆ. ಈ ಮುಖ್ಯಮಂತ್ರಿ ಎದೆ ಮುಟ್ಟಿಕೊಂಡು ಮಾತನಾಡಲಿ. ಈ ಬಗ್ಗೆ ರಾಜ್ಯದ ಜನತೆಯ ಮುಂದೆ ಸತ್ಯವನ್ನು ಬಾಯಿ ಬಿಡಲಿ ಎಂದು ಕುಮಾರಸ್ವಾಮಿ ಅವರು ನೇರ ಸವಾಲು ಹಾಕಿದರು.

ವಿದ್ಯಾರ್ಥಿ, ಯುವ ಸಮೂಹಕ್ಕೆ ಕರೆ ನೀಡಿದ ಕೇಂದ್ರ ಸಚಿವರು:

ನೈಸ್ ಯೋಜನೆ ಇಡೀ ದೇಶದಲ್ಲಿಯೇ ಅತೀ ದೊಡ್ಡ ಭೂ ಹಗರಣ. ಇದು ಸ್ಕ್ಯಾಮ್ ಫಾರ್ ಸ್ಕಿಮ್ ಎನ್ನುವ ರೀತಿಯಲ್ಲಿದೆ. ಈ ಅಕ್ರಮದ ವಿರುದ್ಧ ಇಡೀ ರಾಜ್ಯವೇ ತಿರುಗಿ ಬೀಳಬೇಕಿದೆ. ಯುವಕರು, ವಿದ್ಯಾರ್ಥಿಗಳು ಇದನ್ನು ಪ್ರಶ್ನೆ ಮಾಡಬೇಕಿದೆ ಎಂದು ಸಚಿವ ಕುಮಾರಸ್ವಾಮಿ ಅವರು ಕರೆ ನೀಡಿದರು. ಈ ಮುಖ್ಯಮಂತ್ರಿಗೂ ನೈಸ್ ಯೋಜನೆಗೂ ಇರುವ ಸಂಬಂಧವೇನು? ನೈಸ್ ಜೊತೆ ಸಿಎಂ ಒಡಂಬಡಿಕೆ ಏನು? ಈ ಕಂಪನಿಯ ಮಾಲೀಕರ ಜೊತೆ ಈ ವ್ಯಕ್ತಿಗೆ ಇರುವ ಸಂಬಂಧಗಳು ಮತ್ತು ವ್ಯವಹಾರಗಳು ಏನು? ಧೈರ್ಯವಿದ್ದರೆ ಜನರ ಮುಂದೆ ಈ ಬಗ್ಗೆ ಮಾತನಾಡಲಿ. ನಾನು ಸತ್ಯ ಹೇಳುವುದಕ್ಕೆ ಅಂಜುವುದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು.

ನೈಸ್ ರಸ್ತೆ ಅಕ್ರಮದ ಬಗ್ಗೆ ರಾಜ್ಯ ಸರಕಾರ ಮೌನಕ್ಕೆ ಶರಣಾಗಿದೆ. ಯೋಜನಾ ಚೌಕಟ್ಟು ಒಪ್ಪಂದ ಸಂಪೂರ್ಣವಾಗಿ ಉಲ್ಲಂಘನೆ ಆಗಿದೆ. ಈ ಸರ್ಕಾರ ನೈಸ್ ಕಂಪನಿ ಜತೆ ನೇರವಾಗಿ ಕುಮ್ಮಕ್ಕಾಗಿದೆ ಎಂದು ಅವರು ದೂರಿದರು. ರೈತರ ಭೂಸ್ವಾಧೀನವಾಗಿ 20 ವರ್ಷಗಳೇ ಆಗಿದೆ. ರೈತರಿಗೆ ಇನ್ನೂ ಪರಿಹಾರ ಕೊಟ್ಟಿಲ್ಲ. ಆದರೆ, ರೈತರಿಂದ ಕಿತ್ತುಕೊಂಡ ಭೂಮಿಯನ್ನು ಮನಸೋಇಚ್ಛೆ ಮಾರಾಟ ಮಾಡಿಕೊಂಡಿದೆ.

ಅಲ್ಲದೆ ಒಪ್ಪಂದದಂತೆ 111 ಕಿ.ಮೀ. ರಸ್ತೆಯನ್ನು ನೈಸ್ ನಿರ್ಮಾಣ ಮಾಡಬೇಕಿತ್ತು. ಆದರೆ ಕೇವಲ 5 ಕಿಲೋಮೀಟರ್ ರಸ್ತೆಯನ್ನಷ್ಟೇ ನಿರ್ಮಿಸಿದೆ. ಹೀಗೆ ಯೋಜನಾ ಚೌಕಟ್ಟು ಒಪ್ಪಂದದ ಎಲ್ಲ ಅಂಶಗಳನ್ನು ಸಾರಾಸಗಟ್ಟಾಗಿ ಉಲ್ಲಂಘನೆ ಮಾಡಿದ ಮೇಲೆಯೂ ಅನೇಕ ವರ್ಷಗಳಿಂದ ನೈಸ್ ಕಂಪನಿ ತನ್ನ ಟೋಲ್ ಪ್ಲಾಜಾಗಳಲ್ಲಿ ವಾಹನ ಸವಾರರಿಂದ ಅಕ್ರಮವಾಗಿ ಹಣ ಸುಲಿಗೆ ಮಾಡುತ್ತಿದೆ ಎಂದು ಕೇಂದ್ರ ಸಚಿವರು ಆರೋಪಿಸಿದರು.

ಇಷ್ಟೆಲ್ಲಾ ಅಕ್ರಮಗಳನ್ನು ಎಸಿಗಿರುವ ಕಾರಣದಿಂದಲೇ ರಾಜ ಹೈಕೋರ್ಟ್ ನೈಸ್ ಯೋಜನೆಯ ಬಗ್ಗೆ ಕಠಿಣವಾದ ಶಬ್ದಗಳ ಮೂಲಕ ತನ್ನ ಅಭಿಪ್ರಾಯವನ್ನು ದಾಖಲಿಸಿದೆ. ನ್ಯಾಯಾಲಯದ ಅಭಿಪ್ರಾಯವನ್ನು ಈಗಾಗಲೇ ಗಣನೆಗೆ ತೆಗೆದುಕೊಂಡು ಸರ್ಕಾರ ನೈಸ್ ವಿರುದ್ಧ ಕ್ರಮ ಜರುಗಿಸಬೇಕಿತ್ತು. ದುರಂತವೆಂದರೆ ರಾಜ್ಯದ ಮುಖ್ಯಮಂತ್ರಿಯೇ ನೇರವಾಗಿ ನೈಸ್ ಕಂಪನಿ ಜೊತೆ ಶಾಮೀಲಾಗಿದ್ದಾರೆ ಎಂದು ಸಚಿವ ಕುಮಾರಸ್ವಾಮಿ ಅವರು ಗಂಭೀರ ಆರೋಪ ಮಾಡಿದರು.

ಸಾರ್ವಜನಿಕವಾಗಿ ಇಷ್ಟೆಲ್ಲ ವಿರೋಧ ಮತ್ತು ಆಕ್ರೋಶ ವ್ಯಕ್ತವಾಗುತ್ತಿದ್ದರು ನೈಸ್ ರಸ್ತೆಗಳಲ್ಲಿ ಟೋಲ್ ಸಂಗ್ರಹ ನಿಲ್ಲುತ್ತಿಲ್ಲ. ಟೋಲ್ ಸಂಗ್ರಹಕ್ಕೆ ಈ ಸರ್ಕಾರವೇ ಒತ್ತಾಸೆಯಾಗಿ ನಿಂತಿದೆ. ಅಲ್ಲಿ ಸುಲಿಗೆ ಮಾಡುವ ಹಣವನ್ನು ಇವರೆಲ್ಲರೂ ಹಂಚಿಕೊಳ್ಳುತ್ತಿದ್ದಾರೆ. ಬಡವಾನ ಸವಾರರ ರಕ್ತವನ್ನು ಹೀರುವ ಕೆಲಸ ನಡೆಯುತ್ತಿದೆ. ರಾಜ್ಯದ ಯುವಜನರು ಈ ಅಕ್ರಮವನ್ನು ನೋಡುತ್ತಾ ಸುಮ್ಮನೆ ಕುಳಿತುಕೊಳ್ಳಬಾರದು ಎಂದು ಕುಮಾರಸ್ವಾಮಿ ಅವರು ಹೇಳಿದರು.

ನನಗೆ ತಿಳಿದ ಮಟ್ಟಿಗೆ ರಾಷ್ಟ್ರದ ಇತಿಹಾಸದಲ್ಲಿಯೇ ಬೃಹತ್ತಾದ ಭೂಹಾಗರಣ ನೈಸ್ ಅಕ್ರಮವಾಗಿದೆ. ನ್ಯಾಯಾಲವೂ ಕೂಡ ಇದೊಂದು ಹಗರಣದಂತೆ ಕಾಣುತ್ತಿದೆ ಎಂದು ಅಭಿಪ್ರಾಯಪಟ್ಟಿದೆ. ಆಡಳಿತ ನಡೆಸುವ ರಾಜಕಾರಣಿಗಳೇ ಶಾಮೀಳಾಗಿ ಅಧಿಕಾರಿಗಳನ್ನು ದುರ್ಬಳಕೆ ಮಾಡಿಕೊಂಡು ನ್ಯಾಯಾಲಯಗಳಿಗೆ ತಪ್ಪು ಮಾಹಿತಿಗಳನ್ನು ಕೊಟ್ಟು ಸರ್ಕಾರಕ್ಕೆ ಛೀಮಾರಿ ಹಾಕಿಸುವ ದುಷ್ಕೃತ್ಯ ನಡೆದಿದೆ. ಸ್ಕೀಂ ಫಾರ್ ಸ್ಕ್ಯಾಮ್ ಯೋಜನೆ ಇದು. ಇದೆಲ್ಲವನ್ನು ನೋಡಿಕೊಂಡು ನಾವು ಮೌನಕ್ಕೆ ಶರಣಾಗಲು ಸಾಧ್ಯವೇ ಇಲ್ಲ ಎಂದು ಕುಮಾರಸ್ವಾಮಿ ಅವರು ಗುಡುಗಿದರು.

ನಾವೆಲ್ಲರೂ ಒಗ್ಗಟ್ಟಾಗಿ ಸೇರಿ ಈ ಅಕ್ರಮದ ವಿರುದ್ಧ ಹೋರಾಟ ನಡೆಸಬೇಕಿದೆ. ಹೋರಾಟ ಎಂದರೆ ನಾವೆಲ್ಲರೂ ಹೋಗಿ ಟೋಲ್ ಪ್ಲಾಝಗಳಾಗೆ ಆ ಗಳಿಗೆ ನುಗ್ಗಬೇಕು ಎಂದಲ್ಲ. ಆ ರೀತಿ ಮಾಡುವುದಿದ್ದರೆ ಯಾವತ್ತೂ ನೈಸ್ ಟೋಲ್ ಕೇಂದ್ರಗಳಿಗೆ ಜನರನ್ನು ನುಗ್ಗಿಸಿಬಿಡುತ್ತಿದ್ದೆ. ಶಾಂತಿಯುತ ಹೋರಾಟ ನಡೆಸುವುದು ನಮ್ಮ ಉದ್ದೇಶ. ನೀವು ಕೂತಿರುವ ಈ ಕಚೇರಿಯ ಹೆಸರು ಜೆಪಿ ಭವನ. ಲೋಕ ನಾಯಕ ಜಯಪ್ರಕಾಶನಾರಾಯಣ ಅವರ ಸ್ಪೂರ್ತಿ ಮತ್ತು ಆದರ್ಶದ ನೆಲೆಗಟ್ಟಿನ ಮೇಲೆ ನಮ್ಮ ಪಕ್ಷ ನಿಂತಿದೆ. ಇಂದಿರಾ ಗಾಂಧಿ ಅವರು ಈ ರಾಷ್ಟ್ರದ ಮೇಲೆ ಹೇರಿದ ತುರ್ತು ಪರಿಸ್ಥಿತಿಯ ವಿರುದ್ಧ ಇಡೀ ರಾಷ್ಟ್ರವನ್ನೇ ಸಂಘಟಿಸಿ ಹೋರಾಟ ನಡೆಸಿದ ಮಹಾನ್ ನಾಯಕರು ಅವರು. ಹೀಗಾಗಿ ನಮ್ಮ ಹೋರಾಟ ಶಾಂತಿ ಮಾರ್ಗದಲ್ಲಿ ನಡೆಯಬೇಕಾಗಿದೆ ಎಂದು ಕೇಂದ್ರ ಸಚಿವರು ಯುವಕರು ಮತ್ತು ವಿದ್ಯಾರ್ಥಿ ಸಮೂಹಕ್ಕೆ ಕಿವಿಮಾತು ಹೇಳಿದರು.

ಟೋಲ್ ಸಂಗ್ರಹ ಮಾಡುತ್ತಿರುವುದೇ ಮಹಾನ್ ಅಕ್ರಮ ಎಂದ ಸಚಿವ ಕುಮಾರಸ್ವಾಮಿ ಅವರು; ಇದರ ಬಗ್ಗೆ ತನಿಖೆ ಮಾಡಿದರೆ ಬಹುದೊಡ್ಡ ಅಕ್ರಮ ಬೈಲಿಗೆ ಬರುತ್ತದೆ. ಸಂಘಟಿತವಾಗಿ ಸರ್ಕಾರವನ್ನು ಶಾಮೀಲು ಮಾಡಿಸಿಕೊಂಡು ಅಧಿಕಾರಿಗಳನ್ನು ದುರುಪಯೋಗ ಮಾಡಿಕೊಂಡು ಅಕ್ರಮ ವಯಸ್ಸಿದ್ದರೆ ಎಂತಹ ಕುಖ್ಯಾತ ಹಗರಣ ಸೃಷ್ಟಿಯಾಗುತ್ತದೆ ಎಂಬುದಕ್ಕೆ ನೈಸ್ ಹಗರಣ ಜಲಂತ ಸಾಕ್ಷಿ ಎಂದು ಸಚಿವರು ಒತ್ತಿ ಹೇಳಿದರು.

ಬೆಂಗಳೂರು ಜನರಷ್ಟೇ ಅಲ್ಲ ರಾಜ್ಯದ ಎಲ್ಲ ಭಾಗದ ಜನರು ನೈಸ್ ಅಕ್ರಮದಿಂದ ನೋವು ಅನುಭವಿಸುತ್ತಿದ್ದಾರೆ. ಯುವ ಸಮುದಾಯ ನೈಸಕ್ರಮಗಳ ಬಗ್ಗೆ ಮನೆ ಮನೆಗೂ ಮಾಹಿತಿ ಕೊಡಬೇಕು. ಬೀದಿ ಬೀದಿಗಳಲ್ಲಿ ಹೋರಾಟ ನಡೆಸಬೇಕು. ಯಾರೂ ಕೂಡ ಟೋಲ್ ಕಟ್ಟದಿರಲು ಜಾಗೃತಿ ಮೂಡಿಸಬೇಕು ಎಂದು ಸಚಿವರು ಕರೆ ನೀಡಿದರು.

ಉದ್ಯಾನವನಗಳನ್ನು ನುಂಗಲು ಸರಕಾರ ಸಂಚು:

ರಿಯಲ್ ಎಸ್ಟೇಟ್ ದಂಧೆಕೋರರಿಗೆ ಜೇಬು ತುಂಬಿಸಲು ಕಂಡಕಂಡ ಭೂಮಿಯನ್ನು ನೋಟಿಫಿಕೇಷನ್ ಮಾಡುತ್ತಿರುವ ಈ ರಾಜ್ಯ ಸರಕಾರ ಈಗ ಅಭಿವೃದ್ಧಿ ನೆಪ ಹೇಳಿ ಬೆಂಗಳೂರಿನ ಉದ್ಯಾನವನಗಳನ್ನು ನುಂಗಲು ಸಂಚು ರೂಪಿಸಿದೆ ಎಂದು ಸಚಿವ ಕುಮಾರಸ್ವಾಮಿ ಅವರು ಆರೋಪಿಸಿದರು. ಬೆಂಗಳೂರಿನಲ್ಲಿ ವಿಶಾಲವಾಗಿರುವ ಉದ್ಯಾನವನಗಳು, ಆಟದ ಮೈದಾನಗಳನ್ನು ಸ್ವಾಹಾ ಮಾಡಲು ಈ ಕೆಟ್ಟ ಸರಕಾರ ಹೊರಟಿದೆ. ಪಾರ್ಕ್ ಗಳ 5% ಜಾಗವನ್ನು ಸಾರ್ವಜನಿಕ ಉದ್ದೇಶಕ್ಕೆ ಎಂದು ನೆಪ ಮಾಡಿಕೊಂಡು ಕೊಳ್ಳೆ ಹೊಡೆಯಲು ಸಂಚು ಹೂಡಿದೆ.

ವಿಧಾನಸೌಧದಲ್ಲಿ ಸಚಿವ ನಾಗೇಂದ್ರ ರಾಜೀನಾಮೆಗೆ ಜೆಡಿಎಸ್ ಮತ್ತು ಬಿಜೆಪಿ ಹೋರಾಟ ಮಾಡುತ್ತಿದ್ದರೆ ಈ ಸರಕಾರ ಅದಕ್ಕೆ ಬೇಕಾದ ಬಿಲ್ ಪಾಸು ಮಾಡಿಕೊಂಡಿದೆ. ಈ ಮೂಲಕ ಬೆಂಗಳೂರಿನ ಲಂಗ್ ಸ್ಪೇಸ್ ಅನ್ನು ನಾಶ ಮಾಡಲು ಹೊರಟಿದೆ. ಅದರ ಜತೆಗೆ ಮನೆಯ ಮುಂದೆ ಕಾರು ನಿಲ್ಲಿಸಿದರೂ ವರ್ಷಕ್ಕೆ ₹25,000 ಕಟ್ಟಬೇಕಂತೆ! ದಿವಾಳಿ ಆಗಿರುವ ಈ ಸರಕಾರ ಜನರ ಜೇಬಿಗೆ ಕೈಹಾಕಿದೆ ಎಂದು ಎಂದು ಸಚಿವ ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದರು.

ನನ್ನ ಬೇನಾಮಿ ಆಸ್ತಿ ಇದ್ದರೆ ತೋರಿಸಿ, ರಾಜಕೀಯ ನಿವೃತ್ತಿಯಾಗುತ್ತೇನೆ:

ಕುಮಾರಸ್ವಾಮಿ ಬೇನಾಮಿ ಆಸ್ತಿಗಳನ್ನು ಹೊಂದಿದ್ದಾರೆ ಎಂದು ಯಾರೋ ಮಾತನಾಡಿರುವುದರನ್ನು ಗಮನಿಸಿದ್ದೇನೆ. ನನ್ನ ಬೇನಾಮಿ ಆಸ್ತಿ ಯಾವುದಾದರೂ ಇದ್ದರೆ ತೋರಿಸಲಿ. ಈ ಸರಕಾರಕ್ಕೆ ನಾನು ನೇರ ಸವಾಲು ಹಾಕುತ್ತೇನೆ. ಅಂತಹ ಯಾವುದಾದರೂ ಅಸ್ತಿ ಇದ್ದರೆ ರಾಜಕೀಯವಾಗಿ ನಿವೃತ್ತಿಯಾಗುತ್ತೇನೆ ಎಂದು ಸವಾಲು ಹಾಕಿದರು.

ಕರ್ನಾಟಕದಲ್ಲಿ SIR ಪೂರ್ಣ: 5.54 ಕೋಟಿ ಮತದಾರರಿರುವ ಕರಡು ಪಟ್ಟಿ ರಿಲೀಸ್, 1.07 ಕೋಟಿ ಮತದಾರರ ಹೆಸರು ಡಿಲೀಟ್

0

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆ ಪೂರ್ಣಗೊಂಡಿದ್ದು, ಮೊದಲ ಕರಡು ಮತದಾರರ ಪಟ್ಟಿ ಬಿಡುಗಡೆ ಮಾಡಲಾಗಿದೆ. ರಾಜ್ಯದಲ್ಲಿ ಒಟ್ಟು 5,54,32,314 ಮತದಾರರಿದ್ದು, 1,07,96,339 ಮತದಾರರ ಹೆಸರುಗಳನ್ನು ಕರಡು ಪಟ್ಟಿಯಿಂದ ತೆಗೆದುಹಾಕಲಾಗಿದೆ.

ರಾಜ್ಯದ ಮುಖ್ಯ ಚುನಾವಣಾ ಅಧಿಕಾರಿ ಅನ್ಬುಕುಮಾರ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಎಸ್‌ಐಆರ್‌ ಪ್ರಕ್ರಿಯೆಗೆ 15,17,042 ಮಂದಿ ಗೈರಾಗಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

65,45,679 ಮತದಾರರು ಶಾಶ್ವತವಾಗಿ ಸ್ಥಳಾಂತರಗೊಂಡಿದ್ದು, 16,39,864 ಮಂದಿ ಮೃತಪಟ್ಟಿದ್ದಾರೆ. 7,09,870 ಮತದಾರರು ಒಂದಕ್ಕಿಂತ ಹೆಚ್ಚು ಕಡೆ ಮತದಾನ ಮಾಡಿರುವುದು ಪತ್ತೆಯಾಗಿದೆ. ಇನ್ನು 3,83,884 ಮತದಾರರು ಇತರ ವರ್ಗಕ್ಕೆ ಸೇರಿದ್ದಾರೆ ಎಂದು ತಿಳಿಸಿದ್ದಾರೆ.

ಒಟ್ಟು 43,81,335 ಮತದಾರರಿಗೆ ಎಸ್‌ಐಆರ್‌ ಸಂಬಂಧ ನೋಟಿಸ್‌ ನೀಡುವ ಪ್ರಕ್ರಿಯೆ ನಡೆಯುತ್ತಿದೆ. ನೋಟಿಸ್‌ ನೀಡುವ ವಿಧಾನ ಸೇರಿದಂತೆ ಪರಿಶೀಲನಾ ಪ್ರಕ್ರಿಯೆ ಇಂದಿನಿಂದ ಆರಂಭವಾಗಲಿದೆ.

ಮತದಾರರ ವರ್ಗೀಕರಣ

  • ಸಾಮಾನ್ಯ ಮತದಾರರು: 4,46,35,975
  • 18ರಿಂದ 19 ವರ್ಷದ ಯುವ ಮತದಾರರು: 3,70,341
  • 20ರಿಂದ 29 ವರ್ಷದ ಮತದಾರರು: 83,87,880
  • 85 ವರ್ಷ ಮೇಲ್ಪಟ್ಟ ಮತದಾರರು: 3,92,302
  • ಎನ್‌ಆರ್‌ಐ ಮತದಾರರು: 951
  • ಸೇವೆಯಲ್ಲಿರುವ ಮತದಾರರು: 44,176
  • ವಿಶೇಷ ಚೇತನ ಮತದಾರರು: 5,55,691

43 ಲಕ್ಷ ಮತದಾರರಿಗೆ ನೋಟಿಸ್‌

ಕರಡು ಮತದಾರರ ಪಟ್ಟಿಯಲ್ಲಿರುವ 43 ಲಕ್ಷಕ್ಕೂ ಅಧಿಕ ಮತದಾರರಿಗೆ ಹೆಚ್ಚುವರಿ ದಾಖಲೆಗಳ ಅಗತ್ಯವಿದ್ದಲ್ಲಿ ಮಾತ್ರ ನೋಟಿಸ್‌ ನೀಡಲಾಗುತ್ತದೆ. ನೋಟಿಸ್‌ನಲ್ಲಿ ಕಾರಣವನ್ನೂ ಸ್ಪಷ್ಟವಾಗಿ ಉಲ್ಲೇಖಿಸಲಾಗುತ್ತದೆ.

ನೋಟಿಸ್‌ಗಳನ್ನು ಮೊಬೈಲ್‌ ಸಂದೇಶದ ಮೂಲಕ ಕಳುಹಿಸುವುದಿಲ್ಲ. ಮತದಾರರ ಮನೆಗೆ ತೆರಳಿ ಖುದ್ದಾಗಿ ನೋಟಿಸ್‌ ನೀಡಲಾಗುತ್ತದೆ. ನೋಟಿಸ್‌ ಸ್ವೀಕರಿಸಿದ ಬಳಿಕ ಏಳು ದಿನಗಳ ಕಾಲ ಪ್ರತಿಕ್ರಿಯೆ ಹಾಗೂ ಅಗತ್ಯ ದಾಖಲೆಗಳನ್ನು ಸಲ್ಲಿಸಲು ಅವಕಾಶವಿರುತ್ತದೆ.

ಈ ಪ್ರಕ್ರಿಯೆಗಾಗಿ 3 ಸಾವಿರಕ್ಕೂ ಅಧಿಕ ARO ಹಾಗೂ EROಗಳನ್ನು ನೇಮಕ ಮಾಡಿಕೊಳ್ಳಲಾಗುತ್ತಿದ್ದು, ಅಕ್ಟೋಬರ್‌ 22ರೊಳಗೆ ನೋಟಿಸ್‌ ನೀಡುವ ಪ್ರಕ್ರಿಯೆ ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ. ಒಬ್ಬ AROಗೆ ಸರಾಸರಿ 1,000 ನೋಟಿಸ್‌ಗಳ ಜವಾಬ್ದಾರಿ ಇರಲಿದೆ.

ಮತದಾರರ ಹೆಸರು, ಹುಟ್ಟಿದ ದಿನಾಂಕ ಅಥವಾ ವಿಳಾಸದಲ್ಲಿ ತಿದ್ದುಪಡಿ ಮಾಡಬೇಕಿದ್ದರೆ ಫಾರ್ಮ್‌-8 ಸಲ್ಲಿಸಬಹುದು ಎಂದು ಚುನಾವಣಾ ಆಯೋಗ ತಿಳಿಸಿದೆ. ನೋಟಿಸ್‌ಗೆ ಸಂಬಂಧಿಸಿದ ಅಕ್ಷೇಪಣೆ ಹಾಗೂ ದಾಖಲೆಗಳನ್ನು ನಿಗದಿತ ಸ್ಥಳದಲ್ಲಿ ಸಲ್ಲಿಸಲು ಅವಕಾಶವಿರುತ್ತದೆ.

ನಗರ ಪ್ರದೇಶಗಳಲ್ಲಿ ‘ನೋ ಮ್ಯಾಪಿಂಗ್’ ಸಮಸ್ಯೆ

ನಗರ ಪ್ರದೇಶಗಳಲ್ಲಿ ‘ನೋ ಮ್ಯಾಪಿಂಗ್’ ಸಮಸ್ಯೆ ಹೆಚ್ಚಾಗಿ ಕಂಡುಬಂದಿದೆ ಎಂದು ಮುಖ್ಯ ಚುನಾವಣಾಧಿಕಾರಿ ತಿಳಿಸಿದ್ದಾರೆ. ಸೆಪ್ಟೆಂಬರ್‌ 23ರೊಳಗೆ ಫಾರ್ಮ್‌-6 ಸಲ್ಲಿಸಿದರೆ ಅಂತಿಮ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಯಾಗಲಿದೆ ಎಂದು ಮಾಹಿತಿ ನೀಡಿದ್ದಾರೆ.

ಆಗಸ್ಟ್‌ 27ರಂದು ‘ಖೇಲೋ ಇಂಡಿಯಾ ಸಂವಾದ’: ಯುವ ಕ್ರೀಡಾಪಟುಗಳೊಂದಿಗೆ ಪ್ರಧಾನಿ ಮೋದಿ ಸಂವಾದ

0

ಬೆಂಗಳೂರು: ರಾಷ್ಟ್ರೀಯ ಕ್ರೀಡಾ ದಿನಾಚರಣೆಯ ಅಂಗವಾಗಿ ಕೇಂದ್ರ ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯದ ವತಿಯಿಂದ ಆಗಸ್ಟ್‌ 27ರಂದು ದೇಶಾದ್ಯಂತ ಬೃಹತ್‌ ಮಟ್ಟದಲ್ಲಿ ‘ಖೇಲೋ ಇಂಡಿಯಾ ಸಂವಾದ – ಖೇಲ್ ಕೀ ಬಾತ್, ಪ್ರಧಾನ ಮಂತ್ರಿ ಮೋದಿ ಕೆ ಸಾಥ್’ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿದೆ.

ದೇಶದ 1,500ಕ್ಕೂ ಹೆಚ್ಚು ಶಿಕ್ಷಣ ಸಂಸ್ಥೆಗಳು ಸೇರಿದಂತೆ ವಿವಿಧ ಸ್ಥಳಗಳಲ್ಲಿ ಏಕಕಾಲಕ್ಕೆ ನಡೆಯಲಿರುವ ವರ್ಚುವಲ್‌ ಸಂವಾದದಲ್ಲಿ ದೇಶದ ನೂರಾರು ಯುವಕರು ಹಾಗೂ ಕ್ರೀಡಾಪಟುಗಳು ಒಂದೇ ವೇದಿಕೆಯಲ್ಲಿ ಭಾಗವಹಿಸಲಿದ್ದಾರೆ.

ಬೆಂಗಳೂರಿನಲ್ಲಿ ಯಲಹಂಕ ನ್ಯೂಟೌನ್‌ನ ಶೇಷಾದ್ರಿಪುರಂ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದ್ದು, ಆಸಕ್ತರು ‘ಮೈ ಭಾರತ್’ ಪೋರ್ಟಲ್‌ ಮೂಲಕ ನೋಂದಾಯಿಸಿಕೊಳ್ಳಬಹುದು ಎಂದು ಕೇಂದ್ರ ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯದ ಅಧೀನದ ಮೈ ಭಾರತ್‌ ತಿಳಿಸಿದೆ.

ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ವರ್ಚುವಲ್‌ ಮೂಲಕ ಯುವ ಕ್ರೀಡಾಪಟುಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಕ್ರೀಡೆ, ಯುವ ನಾಯಕತ್ವ ಹಾಗೂ ವಿಕಸಿತ ಭಾರತ ಸೇರಿದಂತೆ ಪ್ರಮುಖ ವಿಷಯಗಳ ಕುರಿತು ಪ್ರಧಾನಿ ತಮ್ಮ ವಿಚಾರಗಳನ್ನು ಹಂಚಿಕೊಳ್ಳಲಿದ್ದಾರೆ. ಬಳಿಕ ಆಯಾ ಸ್ಥಳಗಳಲ್ಲಿ ಭೌತಿಕ ಸಂವಾದ ಕಾರ್ಯಕ್ರಮಗಳು ನಡೆಯಲಿವೆ.

ಐಐಟಿ, ಐಐಎಂ, ಎನ್‌ಐಟಿ, ಏಮ್ಸ್‌ ಸೇರಿದಂತೆ ದೇಶದ ಪ್ರಮುಖ ವೈದ್ಯಕೀಯ ಕಾಲೇಜುಗಳು, ವಿಶ್ವವಿದ್ಯಾಲಯಗಳು ಹಾಗೂ ಶಿಕ್ಷಣ ಸಂಸ್ಥೆಗಳು ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸಲಿವೆ.

2036ರ ಒಲಿಂಪಿಕ್ಸ್‌ ಮೇಲೆ ಗಮನ

ದೇಶದ ಕ್ರೀಡಾ ಭವಿಷ್ಯ ಹಾಗೂ ಮುನ್ನೆಲೆಗೆ ಬರುತ್ತಿರುವ ಯುವ ಕ್ರೀಡಾಪಟುಗಳು ತಮ್ಮ ಆಲೋಚನೆಗಳು ಮತ್ತು ಸಲಹೆಗಳನ್ನು ನೇರವಾಗಿ ಹಂಚಿಕೊಳ್ಳಲು ಈ ಸಂವಾದ ವೇದಿಕೆಯಾಗಲಿದೆ.

ದೇಶದ ಕ್ರೀಡಾ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವುದು, ಗ್ರಾಮೀಣ ಪ್ರದೇಶಗಳಲ್ಲಿ ಕ್ರೀಡಾ ಮೂಲಸೌಕರ್ಯ ಹಾಗೂ ತರಬೇತಿ ಸೌಲಭ್ಯಗಳನ್ನು ವಿಸ್ತರಿಸುವುದು, 2036ರ ಒಲಿಂಪಿಕ್ಸ್‌ ಹಿನ್ನೆಲೆಯಲ್ಲಿ ಪ್ರತಿಭೆಗಳನ್ನು ಗುರುತಿಸುವುದು ಮತ್ತು ಯುವ ನಾಯಕತ್ವವನ್ನು ಉತ್ತೇಜಿಸುವುದು ಕಾರ್ಯಕ್ರಮದ ಪ್ರಮುಖ ಉದ್ದೇಶಗಳಾಗಿವೆ.

ಇದೇ ವೇಳೆ ಕ್ರೀಡಾಸಕ್ತ ಯುವಕರಿಗೆ ಭಾರತದ ದಿಗ್ಗಜ ಕ್ರೀಡಾಪಟುಗಳೊಂದಿಗೆ ನೇರವಾಗಿ ಸಂವಾದ ನಡೆಸುವ ಅವಕಾಶವೂ ಸಿಗಲಿದೆ. ದೀಪಾ ಕರ್ಮಾಕರ್‌, ಸೈನಾ ನೆಹ್ವಾಲ್‌, ಗಗನ್ ನಾರಂಗ್‌, ಪಿ.ಆರ್‌. ಶ್ರೀಜೇಶ್‌, ಮೇರಿ ಕೋಮ್‌, ಬೈಚುಂಗ್ ಭುಟಿಯಾ, ಪುಲ್ಲೇಲ ಗೋಪಿಚಂದ್‌, ಅಂಜು ಬಾಬಿ ಜಾರ್ಜ್‌, ಕರ್ಣಂ ಮಲ್ಲೇಶ್ವರಿ, ಮೀರಾಬಾಯಿ ಚಾನು ಹಾಗೂ ಪಿ.ಟಿ. ಉಷಾ ಸೇರಿದಂತೆ ಹಲವು ಕ್ರೀಡಾ ತಾರೆಯರು ತಮ್ಮ ಕ್ರೀಡಾ ಪಯಣ, ಸವಾಲುಗಳು ಮತ್ತು ಅನುಭವಗಳನ್ನು ಯುವಕರೊಂದಿಗೆ ಹಂಚಿಕೊಳ್ಳಲಿದ್ದಾರೆ.

ಇವರೊಂದಿಗೆ ಸಂಸದರು, ಶಾಸಕರು, ಕೇಂದ್ರ ಸಚಿವರು ಹಾಗೂ ವಿವಿಧ ರಾಜ್ಯಗಳ ಕ್ರೀಡಾ ಸಚಿವರು ಕೂಡ ಸಂವಾದದಲ್ಲಿ ಭಾಗವಹಿಸಿ ಯುವಕರ ಸಲಹೆಗಳನ್ನು ಸ್ವೀಕರಿಸಲಿದ್ದಾರೆ.

ಮೊದಲ ಪತ್ನಿ ಜೀವಂತವಾಗಿರುವಾಗಲೇ ಎರಡನೇ ಮದುವೆಗೆ ಕುಮ್ಮಕ್ಕು ನೀಡಿದರೆ ಕೇಸ್: ಹೈಕೋರ್ಟ್

0

ಬೆಂಗಳೂರು: ಮೊದಲ ಪತ್ನಿಯಿಂದ ವಿಚ್ಛೇದನ ಪಡೆಯದೇ, ಆಕೆ ಜೀವಂತವಾಗಿರುವ ಸಂದರ್ಭದಲ್ಲಿ ಮತ್ತೊಂದು ಮದುವೆಯಾಗುವ ಪ್ರಕರಣಗಳಲ್ಲಿ, ಎರಡನೇ ಮದುವೆಗೆ ಕುಮ್ಮಕ್ಕು ನೀಡುವ, ಪ್ರಚೋದಿಸುವ ಅಥವಾ ನೇರವಾಗಿ ಸಹಾಯ ಮಾಡುವ ಸಂಬಂಧಿಕರು ಹಾಗೂ ಇತರ ವ್ಯಕ್ತಿಗಳ ವಿರುದ್ಧವೂ ಭಾರತೀಯ ದಂಡ ಸಂಹಿತೆ (ಐಪಿಸಿ) ಸೆಕ್ಷನ್ 109ರ ಅಡಿಯಲ್ಲಿ ಕ್ರಿಮಿನಲ್ ಪ್ರಕರಣ ದಾಖಲಿಸಲು ಕಾನೂನಿನಲ್ಲಿ ಯಾವುದೇ ಅಡ್ಡಿಯಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಸ್ಪಷ್ಟಪಡಿಸಿದೆ.

ಎರಡನೇ ಮದುವೆಯಾಗಿರುವ ಆರೋಪ ಎದುರಿಸುತ್ತಿರುವ ಸುನೀಲ್ ಕುಮಾರ್ ಮತ್ತಿತರರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಚ್.ಪಿ. ಸಂದೇಶ್ ಹಾಗೂ ನ್ಯಾಯಮೂರ್ತಿ ಟಿ.ಎಂ. ನದಾಫ್ ಅವರಿದ್ದ ಕಲಬುರಗಿ ಪೀಠ ಈ ಮಹತ್ವದ ಆದೇಶ ನೀಡಿದೆ.

ಐಪಿಸಿ ಸೆಕ್ಷನ್ 494ರ ಅಡಿಯಲ್ಲಿ ಮೊದಲ ಪತ್ನಿ ಜೀವಂತವಾಗಿರುವಾಗ ಎರಡನೇ ವಿವಾಹವಾಗುವ ವ್ಯಕ್ತಿಯ ವಿರುದ್ಧ ದ್ವಿಪತ್ನಿತ್ವದ ಆರೋಪ ಅನ್ವಯಿಸುತ್ತದೆ. ಆದರೆ, ಈ ಕೃತ್ಯಕ್ಕೆ ಕುಮ್ಮಕ್ಕು ನೀಡುವ ಅಥವಾ ಸಹಕರಿಸುವ ಇತರರಿಗೆ ಶಿಕ್ಷೆಯಿಂದ ಯಾವುದೇ ವಿಶೇಷ ವಿನಾಯಿತಿ ನೀಡಲಾಗಿಲ್ಲ ಎಂದು ಪೀಠ ತಿಳಿಸಿದೆ.

ಮೊದಲ ಮದುವೆ ಕಾನೂನುಬದ್ಧವಾಗಿ ಜಾರಿಯಲ್ಲಿದೆ ಎಂಬ ವಿಚಾರ ತಿಳಿದಿದ್ದರೂ, ಎರಡನೇ ಮದುವೆಗೆ ಅಗತ್ಯ ವ್ಯವಸ್ಥೆ ಮಾಡುವುದು, ಪ್ರಚೋದನೆ ನೀಡುವುದು ಅಥವಾ ವಿವಾಹ ಕಾರ್ಯಕ್ರಮದಲ್ಲಿ ನೇರವಾಗಿ ಭಾಗವಹಿಸಿ ಸಹಾಯ ಮಾಡುವುದು ನಡೆದಿದ್ದರೆ, ಅಂತಹ ವ್ಯಕ್ತಿಗಳ ವಿರುದ್ಧವೂ ಐಪಿಸಿ ಸೆಕ್ಷನ್ 109ರ ಅಡಿಯಲ್ಲಿ ಪ್ರಚೋದನೆ ಆರೋಪ ಅನ್ವಯಿಸುತ್ತದೆ ಎಂದು ನ್ಯಾಯಪೀಠ ಸ್ಪಷ್ಟಪಡಿಸಿದೆ.

ಈ ಸಂಬಂಧ ಸುಪ್ರೀಂಕೋರ್ಟ್ ಮತ್ತು ವಿವಿಧ ಹೈಕೋರ್ಟ್‌ಗಳ ಹಿಂದಿನ ತೀರ್ಪುಗಳನ್ನು ಪರಿಗಣಿಸಿದ ನ್ಯಾಯಪೀಠ, ಎರಡನೇ ಮದುವೆಗೆ ಸಹಕರಿಸಿದವರ ವಿರುದ್ಧ ದಾಖಲಿಸಿರುವ ಐಪಿಸಿ ಸೆಕ್ಷನ್ 109ರ ಅಡಿಯಲ್ಲಿ ಪ್ರಚೋದನೆ ಆರೋಪವನ್ನು ಕೇವಲ ಈ ಕಾರಣಕ್ಕಾಗಿ ಕೈಬಿಡಲು ಸಾಧ್ಯವಿಲ್ಲ ಎಂದು ಹೇಳಿದೆ.

ಪ್ರಕರಣದ ಹಿನ್ನೆಲೆ

ಪ್ರಕರಣದ ಅರ್ಜಿದಾರ ಸುನೀಲ್ ಕುಮಾರ್ ಅವರು ಮೊದಲ ಪತ್ನಿ ಜೀವಂತವಾಗಿದ್ದರೂ ಮತ್ತೊಬ್ಬ ಮಹಿಳೆಯನ್ನು ಎರಡನೇ ವಿವಾಹವಾಗಿದ್ದರು ಎಂಬ ಆರೋಪ ಎದುರಿಸುತ್ತಿದ್ದರು. ಈ ಹಿನ್ನೆಲೆಯಲ್ಲಿ ಮೊದಲ ಪತ್ನಿ ವಿಚಾರಣಾ ನ್ಯಾಯಾಲಯಕ್ಕೆ ಖಾಸಗಿ ದೂರು ಸಲ್ಲಿಸಿ, ಪ್ರಕರಣದ ಕುರಿತು ತನಿಖೆ ನಡೆಸುವಂತೆ ಮನವಿ ಮಾಡಿದ್ದರು.

ದೂರಿನ ವಿಚಾರಣೆ ನಡೆಸಿದ ನ್ಯಾಯಾಲಯವು ಐಪಿಸಿ ಸೆಕ್ಷನ್ 494, ಸೆಕ್ಷನ್ 109 ಹಾಗೂ ಸೆಕ್ಷನ್ 149ರ ಅಡಿಯಲ್ಲಿ ಕಾಗ್ನಿಜೆನ್ಸ್ ಪಡೆದುಕೊಂಡಿತ್ತು. ಬಳಿಕ ಪ್ರಕರಣದ ಕುರಿತು ತನಿಖೆ ನಡೆಸುವಂತೆ ಸಿಂದಗಿ ಪೊಲೀಸ್ ಠಾಣೆಗೆ ನಿರ್ದೇಶನ ನೀಡಿತ್ತು.

ಈ ಪ್ರಕರಣದಲ್ಲಿ ಎರಡನೇ ಮದುವೆಯಾಗಿದ್ದ ಪತಿ, ಎರಡನೇ ಪತ್ನಿ ಹಾಗೂ ವಿವಾಹ ನೆರವೇರಿಸಿದ ಅರ್ಚಕರು ಸೇರಿದಂತೆ ಇತರರ ವಿರುದ್ಧವೂ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಇದನ್ನು ಪ್ರಶ್ನಿಸಿ ಆರೋಪಿಗಳು ಹೈಕೋರ್ಟ್ ಮೆಟ್ಟಿಲೇರಿದ್ದರು.

ಅರ್ಜಿಯ ವಿಚಾರಣೆ ನಡೆಸಿದ್ದ ಏಕಸದಸ್ಯ ಪೀಠದ ಮುಂದೆ, ಐಪಿಸಿ ಸೆಕ್ಷನ್ 494ರ ಅಡಿಯಲ್ಲಿ ನಡೆಯುವ ಅಪರಾಧಕ್ಕೆ ಸೆಕ್ಷನ್ 109ರ ಪ್ರಕಾರ ಇತರ ವ್ಯಕ್ತಿಗಳ ವಿರುದ್ಧವೂ ಕುಮ್ಮಕ್ಕು ನೀಡಿದ ಆರೋಪ ಅನ್ವಯಿಸಬಹುದೇ ಎಂಬ ಕಾನೂನು ಪ್ರಶ್ನೆ ಎದುರಾಗಿತ್ತು.

ಈ ಪ್ರಮುಖ ಕಾನೂನು ಪ್ರಶ್ನೆಯ ಹಿನ್ನೆಲೆಯಲ್ಲಿ ಪ್ರಕರಣವನ್ನು ವಿಸ್ತೃತ ಪೀಠದ ಪರಿಗಣನೆಗೆ ಕಳುಹಿಸುವಂತೆ ಏಕಸದಸ್ಯ ಪೀಠವು ಮುಖ್ಯ ನ್ಯಾಯಮೂರ್ತಿಗಳ ಪೀಠಕ್ಕೆ ರವಾನಿಸಿತ್ತು. ಬಳಿಕ ಮುಖ್ಯ ನ್ಯಾಯಮೂರ್ತಿಗಳು ಪ್ರಕರಣವನ್ನು ದ್ವಿಸದಸ್ಯ ಪೀಠಕ್ಕೆ ವರ್ಗಾವಣೆ ಮಾಡಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಚ್.ಪಿ. ಸಂದೇಶ್ ಹಾಗೂ ನ್ಯಾಯಮೂರ್ತಿ ಟಿ.ಎಂ. ನದಾಫ್ ಅವರಿದ್ದ ದ್ವಿಸದಸ್ಯ ಪೀಠ ಇದೀಗ ಎರಡನೇ ಮದುವೆಗೆ ಸಹಕರಿಸಿದವರ ವಿರುದ್ಧವೂ ಐಪಿಸಿ ಸೆಕ್ಷನ್ 109ರ ಅಡಿಯಲ್ಲಿ ಪ್ರಕರಣ ದಾಖಲಿಸಲು ಕಾನೂನಿನಲ್ಲಿ ಅವಕಾಶವಿದೆ ಎಂದು ಸ್ಪಷ್ಟಪಡಿಸಿದೆ.

ಹನೂರು ಅರಣ್ಯ ಶೂಟೌಟ್ ಪ್ರಕರಣ: ಸರ್ಕಾರ ಸತ್ಯ ಮರೆಮಾಚುತ್ತಿದೆ – ಬಿ.ವೈ. ವಿಜಯೇಂದ್ರ ಆರೋಪ

0

ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ವ್ಯಾಪ್ತಿಯಲ್ಲಿ ನಡೆದಿರುವ ಅರಣ್ಯ ಶೂಟೌಟ್ ಪ್ರಕರಣದ ಸತ್ಯಾಂಶವನ್ನು ರಾಜ್ಯ ಸರ್ಕಾರ ಮರೆಮಾಚುವ ಪ್ರಯತ್ನ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆರೋಪಿಸಿದ್ದಾರೆ.

ವಿಧಾನಸೌಧದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಜಯೇಂದ್ರ, ಪ್ರಕರಣದ ಸತ್ಯಾಂಶವನ್ನು ತಿಳಿದುಕೊಳ್ಳುವ ಉದ್ದೇಶದಿಂದ ಬಿಜೆಪಿ ವತಿಯಿಂದ ಈಗಾಗಲೇ ಸತ್ಯಶೋಧನಾ ಸಮಿತಿ ರಚಿಸಲಾಗಿತ್ತು. ಸಮಿತಿ ಸ್ಥಳಕ್ಕೆ ತೆರಳಿ ಮಾಹಿತಿ ಸಂಗ್ರಹಿಸಿದ ಬಳಿಕ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಷ್ಟು ಗಂಭೀರ ಪ್ರಶ್ನೆಗಳು ಮತ್ತು ಅನುಮಾನಗಳು ಮೂಡಿವೆ ಎಂದು ಹೇಳಿದ್ದಾರೆ.

ಹನೂರು ಪ್ರಕರಣದಲ್ಲಿ ಮೃತದೇಹಗಳನ್ನು ಆತುರಾತುರವಾಗಿ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಆದರೆ ಇದುವರೆಗೆ ಮರಣೋತ್ತರ ಪರೀಕ್ಷೆಯ ವರದಿಯನ್ನು ಸಾರ್ವಜನಿಕವಾಗಿ ಬಿಡುಗಡೆ ಮಾಡಿಲ್ಲ. ವರದಿ ಏಕೆ ಬಿಡುಗಡೆ ಮಾಡುತ್ತಿಲ್ಲ ಎಂಬುದಕ್ಕೆ ಸರ್ಕಾರ ಉತ್ತರ ನೀಡಬೇಕು ಎಂದು ವಿಜಯೇಂದ್ರ ಆಗ್ರಹಿಸಿದ್ದಾರೆ.

ಮರಣೋತ್ತರ ಪರೀಕ್ಷೆಯ ವರದಿಯನ್ನು ಮುಚ್ಚಿಡುವ ಅಗತ್ಯವೇನು? ವರದಿಯಲ್ಲಿ ಏನಿದೆ ಎಂಬುದನ್ನು ಜನರಿಗೆ ತಿಳಿಸಬೇಕಲ್ಲವೇ? ವರದಿಯನ್ನು ಬಿಡುಗಡೆ ಮಾಡದಿರುವುದೇ ಹಲವು ಅನುಮಾನಗಳಿಗೆ ಕಾರಣವಾಗಿದೆ ಎಂದು ಅವರು ಪ್ರಶ್ನಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಘಟನೆಯ ಕೆಲವು ಫೋಟೋಗಳನ್ನು ಪ್ರದರ್ಶಿಸಿದ ವಿಜಯೇಂದ್ರ, ಮೃತ ವ್ಯಕ್ತಿಯ ಭುಜದ ಭಾಗಕ್ಕೆ ಗನ್‌ ಇಟ್ಟು ಅತ್ಯಂತ ಸಮೀಪದಿಂದ ಗುಂಡು ಹಾರಿಸಿರುವಂತೆ ಫೋಟೋಗಳಲ್ಲಿ ಕಾಣಿಸುತ್ತಿದೆ ಎಂದು ಆರೋಪಿಸಿದರು.

ತಜ್ಞರ ಅಭಿಪ್ರಾಯದ ಪ್ರಕಾರ ಇದು ದೂರದಿಂದ ಅಥವಾ ಲಾಂಗ್‌ ರೇಂಜ್‌ನಿಂದ ಗುಂಡು ಹಾರಿಸಿದ ಪ್ರಕರಣದಂತೆ ಕಾಣುತ್ತಿಲ್ಲ. ಸಮೀಪದಿಂದ ಗುಂಡು ಹಾರಿಸಿರುವ ಸಾಧ್ಯತೆಯಿದೆ ಎಂದು ವಿಜಯೇಂದ್ರ ಹೇಳಿದ್ದಾರೆ. ಮರಣೋತ್ತರ ಪರೀಕ್ಷೆ ನಡೆಸಿದ ವೈದ್ಯರು ಕೂಡ ಈ ಅಂಶವನ್ನು ವರದಿಯಲ್ಲಿ ಉಲ್ಲೇಖಿಸಿದ್ದಾರೆ ಎಂಬ ಮಾಹಿತಿ ಇದೆ ಎಂದು ಅವರು ತಿಳಿಸಿದ್ದಾರೆ.

ಹಾಗಿದ್ದರೆ ಮರಣೋತ್ತರ ಪರೀಕ್ಷೆಯ ವರದಿಯನ್ನು ಸರ್ಕಾರ ಏಕೆ ಬಹಿರಂಗಪಡಿಸುತ್ತಿಲ್ಲ? ಎಂದು ಪ್ರಶ್ನಿಸಿದ ಅವರು, ಈ ಎಲ್ಲಾ ಅಂಶಗಳನ್ನು ಸಮಗ್ರವಾಗಿ ಪರಿಶೀಲಿಸಿದಾಗ ಇದು ಸಾಮಾನ್ಯ ಎನ್‌ಕೌಂಟರ್‌ ಪ್ರಕರಣವೇ ಅಥವಾ ಇದರ ಹಿಂದೆ ಬೇರೆ ಯಾವುದಾದರೂ ಕಾರಣವಿದೆಯೇ ಎಂಬ ಅನುಮಾನ ಮೂಡುತ್ತಿದೆ ಎಂದು ಹೇಳಿದ್ದಾರೆ.