Home Blog

ವಾರದೊಳಗೆ ಸಿಎಂ ವಿಚಾರದ ಗೊಂದಲ ಸರಿಪಡಿಸದಿದ್ದರೆ ನಾವೇ ಹೈಕಮಾಂಡ್ ಭೇಟಿ ಮಾಡುತ್ತೇವೆ: ಕೆ.ಎಂ. ಉದಯ್

0

ಮಂಡ್ಯ: ವಾರದೊಳಗೆ ಮುಖ್ಯಮಂತ್ರಿ ಬದಲಾವಣೆಯ ನಿರ್ಧಾರ ತೆಗೆದುಕೊಳ್ಳುವಂತೆ ಹೈಕಮಾಂಡ್‌ಗೆ ಮದ್ದೂರು ಕ್ಷೇತ್ರದ ಶಾಸಕ ಕೆ.ಎಂ. ಉದಯ್ ಗಡುವು ನೀಡಿದರು.

ಮದ್ದೂರಿನಲ್ಲಿ ಮಾತನಾಡಿ, “ಸಿಎಂ ಕುರಿತು ಗೊಂದಲವನ್ನು ಸರಿಪಡಿಸದಿದ್ದರೆ ನಾವು ಸ್ವತಃ ಹೈಕಮಾಂಡ್ ಭೇಟಿ ಮಾಡುತ್ತೇವೆ. ನಂತರ ಅವರ ತೀರ್ಮಾನ ಯಾವುದು ಆಗಲಿ, ನಾವು ಅದಕ್ಕೆ ಬದಲಾಗುವುದಿಲ್ಲ” ಎಂದು ಸ್ಪಷ್ಟಪಡಿಸಿದರು. ಅವರು ಸಂಘಟನೆಯೊಳಗಿನ ಹೊಸ ಶಾಸಕರ ಸೇರ್ಪಡೆ ಹಾಗೂ ಸಂಪುಟ ಬದಲಾವಣೆ ಕುರಿತು ಹೈಕಮಾಂಡ್ ದಿನಾಂಕ ತಿಳಿಸುತ್ತದೆ. ನಾವು ಅದನ್ನು ನೀಡುವುದಿಲ್ಲ ಎಂದು ಸೂಚಿಸಿದರು.

ಹೈಕಮಾಂಡ್ ಸಿಎಂ ಬದಲಾವಣೆ ಮತ್ತು ಸಂಪುಟ ಪುನರ್‌ರಚನೆ ಬಗ್ಗೆ ತ್ವರಿತ ಕ್ರಮ ಕೈಗೊಳ್ಳಬೇಕು. ದಲಿತ ಸಮುದಾಯಕ್ಕೆ ಸಿಎಂ ಹುದ್ದೆ ನೀಡುವ ವಿಚಾರದಲ್ಲಿ ವಿರೋಧವಿಲ್ಲ, ಆದರೆ ಸಮರ್ಥ ನಾಯಕನನ್ನೇ ಆಯ್ಕೆ ಮಾಡಬೇಕು ಎಂದು ಹೇಳಿದರು.

`ಮಿಷನ್ ಪ್ರಕೃತಿ’ ರಾಜ್ಯ ಮಟ್ಟದ ಪ್ರಶಸ್ತಿ ಸ್ವೀಕರಿಸಿದ ಜೋಡಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ

0

ವಿಜಯಸಾಕ್ಷಿ ಸುದ್ದಿ, ಧಾರವಾಡ: ಭೂಮಿಯ ನೈಸರ್ಗಿಕ ಅವನತಿಯನ್ನು ನಿಲ್ಲಿಸುವುದು ಮತ್ತು ಮಾನವರು ಪ್ರಕೃತಿಯೊಂದಿಗೆ ಸಾಮರಸ್ಯದಿಂದ ಬದುಕುವ ಭವಿಷ್ಯವನ್ನು ನಿರ್ಮಿಸುವ ಉದ್ದೇಶದಿಂದ ಸಮಗ್ರ ಶಿಕ್ಷಣ ಕರ್ನಾಟಕ ಬೆಂಗಳೂರು ಮತ್ತು ವರ್ಲ್ಡವೈಲ್ಡ್ ಫಂಡ್ ಫಾರ್ ನೇಚರ್ (ಡಬ್ಲ್ಯುಡಬ್ಲ್ಯುಎಫ್-ಇಂಡಿಯಾ) ಇವರ ಸಹಯೋಗದೊಂದಿಗೆ ಕರ್ನಾಟಕ ರಾಜ್ಯದ 5 ಸಾವಿರ ಸರ್ಕಾರಿ ಶಾಲೆಗಳಲ್ಲಿ 2025-26ನೇ ಸಾಲಿನಲ್ಲಿ ಮಿಷನ್ ಪ್ರಕೃತಿ ಕಾರ್ಯಕ್ರಮವನ್ನು ಹಮ್ಮಿಕೊಂಡು ಶಾಲಾ ಮಕ್ಕಳಿಗೆ ಪರಿಸರ ಸಂರಕ್ಷಣೆ ಕುರಿತು ಜಾಗೃತಿ ಮೂಡಿಸುವ ಚಟುವಟಿಕೆಗಳನ್ನು ಶಾಲಾ ಹಂತದಲ್ಲಿ ಆಯೋಜಿಸಲಾಗಿತ್ತು.

ಮಿಷನ್ ಪ್ರಕೃತಿ ಕಾರ್ಯಕ್ರಮವು ಶಿಕ್ಷಕರ ಸಹಕಾರದೊಂದಿಗೆ ವಿದ್ಯಾರ್ಥಿಗಳೇ ನಡೆಸುವ ವಿಶಿಷ್ಟ ಕಾರ್ಯಕ್ರಮವಾಗಿದ್ದು, ಶಾಲೆ, ಮನೆ ಮತ್ತು ಸಮುದಾಯಗಳಲ್ಲಿ ಪರಿಸರ ಸಂರಕ್ಷಣೆ ಕುರಿತು ಜವಾಬ್ದಾರಿಯುತ ಅಭ್ಯಾಸಗಳನ್ನು ಪ್ರಾಯೋಗಿಕವಾಗಿ ಮಾಡಿ ತಿಳಿದುಕೊಂಡು ಅನುಷ್ಠಾನ ಮಾಡುವುದಾಗಿದೆ. ಈ ಕಾರ್ಯಕ್ರಮವು ಐದು ಪ್ರಮುಖ ಕ್ಷೇತ್ರಗಳಾದ ಜೀವ ವೈವಿಧ್ಯ, ನೀರು, ತ್ಯಾಜ್ಯ, ಆಹಾರ ಮತ್ತು ಶಕ್ತಿ ಎಂಬ ವಿಷಯಗಳ ಅಡಿಯಲ್ಲಿ ಮಕ್ಕಳು ಪ್ರಾಯೋಗಿಕವಾಗಿ ಶಾಲೆ ಹಾಗೂ ಸಮುದಾಯದ ಆಡಿಟ್ ಕೈಗೊಂಡು ಸಮಸ್ಯೆಗಳನ್ನು ಗುರುತಿಸುವುದು ಹಾಗೂ ಗುರುತಿಸಿದ ಸಮಸ್ಯೆಗಳಿಗೆ ಪರಿಹಾರಗಳನ್ನು ಸೂಚಿಸುವುದು ಮತ್ತು ಪರಿಹಾರೋಪಾಯಗಳನ್ನು ಅನುಷ್ಠಾನಗೊಳಿಸುವುದರ ಮೂಲಕ ಚಿಕ್ಕ ವಯಸ್ಸಿನಲ್ಲಿಯೇ ಪರಿಸರ ಸಂರಕ್ಷಣೆ ಕುರಿತು ಜವಾಬ್ದಾರಿ ಮೂಡಿಸುವುದಾಗಿದೆ.

ಮಕ್ಕಳು ಕೈಗೊಂಡ ಎಲ್ಲಾ ಕಾರ್ಯಗಳ ಮಾಹಿತಿಯನ್ನು ಸ್ಯಾಟ್ಸ್ ಪೋರ್ಟಲ್‌ನಲ್ಲಿ ಅಪ್ಲೋಡ್ ಮಾಡಲು ಅವಕಾಶ ಕಲ್ಪಿಸಲಾಗಿತ್ತು. ಅಪ್ಲೋಡ್ ಮಾಡಲಾದ ಎಲ್ಲಾ ಶಾಲೆಗಳ ಮಾಹಿತಿಯನ್ನು ಮೌಲ್ಯಮಾಪನ ಕೈಗೊಂಡ ನಂತರ 5 ಸಾವಿರ ಶಾಲೆಗಳ ಪೈಕಿ 10 ಉತ್ತಮ ಕಾರ್ಯ ನಿರ್ವಹಣೆ ಮಾಡಿದ ಶಾಲೆಗಳನ್ನು ಆಯ್ಕೆ ಮಾಡಿ ಪ್ರಶಸ್ತಿ ನೀಡಲಾಯಿತು. ಈ ಪೈಕಿ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಜೋಡಳ್ಳಿ ಕೂಡ ಪ್ರಶಸ್ತಿ ಪಡೆದುಕೊಂಡಿದ್ದು, ಬೆಂಗಳೂರಿನ ವಿಕಾಸ ಸೌಧದಲ್ಲಿ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಪ್ರಶಸ್ತಿ ಪ್ರದಾನ ಮಾಡಿದರು.

ಡಯಟ್‌ನ ಪ್ರಾಚಾರ್ಯ ಬಸವರಾಜ ನಾಲತವಾಡ, ಮಿಷನ್ ಪ್ರಕೃತಿ ಕಾರ್ಯಕ್ರಮದ ಜಿಲ್ಲಾ ನೋಡಲ್ ಅಧಿಕಾರಿ ಹಾಗೂ ಡಯಟ್‌ನ ಉಪನ್ಯಾಸಕರಾದ ಪ್ರಕಾಶ ಅಂಗಡಿ, ಡಯಟ್‌ನ ಎಲ್ಲಾ ಹಿರಿಯ ಉಪನ್ಯಾಸಕರು, ಕಲಘಟಗಿ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಗಾಯತ್ರಿ ದೇವಿ ಸಜ್ಜನ್, ಕ್ಷೇತ್ರ ಸಮನ್ವಯಾಧಿಕಾರಿಗಳಾದ ಪಾಂಡುರಂಗ ಪೂಜೇರಿ, ದುಮ್ಮವಾಡ ಕ್ಲಸ್ಟರ್ ಸಿಆರ್‌ಪಿ ಪ್ರಶಾಂತ್ ರೆಡ್ಡೇರ, ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷರು, ಸರ್ವ ಸದಸ್ಯರು, ದುಮ್ಮವಾಡ ಗ್ರಾಮದ ಸಮಸ್ತ ನಾಗರಿಕರು, ಹಿರಿಯರು ಮಿಷನ್ ಪ್ರಕೃತಿ ಕಾರ್ಯಕ್ರಮ ಅನುಷ್ಠಾನಗೊಳಿಸಿದ ಎಲ್ಲರಿಗೂ ಅಭಿನಂದನೆಗಳನ್ನು ತಿಳಿಸಿದ್ದಾರೆ.

ಪ್ರಶಸ್ತಿಯನ್ನು ಶಾಲೆಯ ಹಸಿರುಪಡೆಯ ಮಕ್ಕಳು, ಶಾಲಾ ನೋಡಲ್ ಶಿಕ್ಷಕಿಯರಾದ ಪ್ರತಿಭಾ ದೊಡ್ಡಮನಿ, ಮುಖ್ಯೋಪಾಧ್ಯಾಯ ಎಮ್.ಎ. ಸುಂಕದ, ಶಾಲೆಯ ಎಸ್‌ಡಿಎಮ್‌ಸಿ ಅಧ್ಯಕ್ಷರು ಹಾಗೂ ಸದಸ್ಯರು, ಮಿಷನ್ ಪ್ರಕೃತಿ ಕಾರ್ಯಕ್ರಮದ ತಾಲೂಕಾ ನೋಡಲ್ ಅಧಿಕಾರಿ ಸುಜಾತ ಚವ್ಹಾಣ ಸ್ವೀಕರಿಸಿದರು. ಆಯುಕ್ತರು ಶಾಲಾ ಶಿಕ್ಷಣ ಇಲಾಖೆ ಬೆಂಗಳೂರು, ನಿರ್ದೇಶಕರು ಶಾಲಾ ಶಿಕ್ಷಣ ಇಲಾಖೆ ಗುಣಮಟ್ಟ ಹಾಗೂ ಡಬ್ಲ್ಯುಡಬ್ಲ್ಯುಎಫ್ ಸಂಸ್ಥೆಯ ಮುಖ್ಯಸ್ಥರು ಹಾಗೂ ಇತರ ಸದಸ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

`ನಡಿತೈತಿ ಬಿಡು’ ಎನ್ನುವ ಅಧಿಕಾರಿಗಳು ಮನೆಗೆ ಹೋಗಿ!

0

ವಿಜಯಸಾಕ್ಷಿ ಸುದ್ದಿ, ಧಾರವಾಡ: ನಮಗೆ, ನಮಗೆಲ್ಲರಿಗೂ ಇರುವ ಸಂಬಳ, ಸವಲತ್ತು ಸಾರ್ವಜನಿಕರಿಂದ ಬಂದಿದ್ದು, ನಮ್ಮ ನಮ್ಮ ಕೆಲಸ, ಕರ್ತವ್ಯಗಳನ್ನು ಮಾನವೀಯತೆ, ಆತ್ಮಸಾಕ್ಷಿಯಿಂದ ಮಾಡಬೇಕು. ವಿನಾಕಾರಣ ವಿಳಂಬ, ಉದ್ಯೋಗದಲ್ಲಿ ಆಲಸ್ಯ ತೋರಿಸುವ ಮತ್ತು `ನಡಿತೈತಿ ಬಿಡು’ ಎನ್ನುವ ಮನೋಭಾವನೆಯ ಅಧಿಕಾರಿ, ಸಿಬ್ಬಂದಿಗಳು ಮನೆಗೆ ಹೋಗಬಹುದು ಎಂದು ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ಅವರು ಮಂಗಳವಾರ ಮಧ್ಯಾಹ್ನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಧಾರವಾಡ ಜಿಲ್ಲಾಡಳಿತ ಆಯೋಜಿಸಿದ್ದ ಜಿಲ್ಲಾ ಮಟ್ಟದ 12ನೇ ಜನತಾ ದರ್ಶನದಲ್ಲಿ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿದ ನಂತರ ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ಉದ್ದೇಶಿಸಿ ಸಚಿವರು ಮಾತನಾಡಿದರು.

ಜನತಾ ದರ್ಶನದಲ್ಲಿ ಬರುವ ಅರ್ಜಿಗಳನ್ನು ಗಮನಿಸಿದಾಗ ಆಯಾ ಇಲಾಖೆ ಅಧಿಕಾರಿಗಳು ಸಾರ್ವಜನಿಕರ ದೂರುಗಳನ್ನು ಸರಿಯಾಗಿ ಪರಿಶೀಲಿಸದೆ ಕಾಟಾಚಾರಕ್ಕೆ ಉತ್ತರಿಸುತ್ತಿದ್ದಾರೆ ಎಂಬುದು ತಿಳಿಯುತ್ತದೆ. ಸಲ್ಲಿಕೆ ಆಗುವ ಸಮಸ್ಯೆಗಳನ್ನು ಸರಿಯಾಗಿ ಪರಿಶೀಲಿಸಿ, ಸೂಕ್ತ ಪರಿಹಾರ ನೀಡಬೇಕು. ಬೇರೆ ಹಂತಕ್ಕೆ ಅರ್ಜಿ ರವಾನಿಸಬೇಕಾದಲ್ಲಿ ಅರ್ಜಿದಾರನಿಗೆ ಸೂಕ್ತ ತಿಳುವಳಿಕೆ ನೀಡಬೇಕು. ಆದರೆ ಸಂಬಂಧಿಸಿದ ಅಧಿಕಾರಿ, ಸಿಬ್ಬಂದಿಗಳು ಸಾರ್ವಜನಿಕ ಕಳಕಳಿ, ಮಾನವೀಯತೆ ನೋಡದೆ ಯಾಂತ್ರಿಕವಾಗಿ ವರ್ತಿಸುತ್ತಿದ್ದಾರೆ ಎಂಬುದು ಸಲ್ಲಿಕೆ ಆಗುತ್ತಿರುವ ಅರ್ಜಿಗಳಿಂದ ತಿಳಿದುಬರುತ್ತಿದೆ ಎಂದು ಸಚಿವರು ಅಸಮಾಧಾನ ವ್ಯಕ್ತಪಡಿಸಿದರು.

ಜಿಲ್ಲೆಯ ಅಧಿಕಾರಿ, ನೌಕರರು ಕರ್ತವ್ಯದಲ್ಲಿ ಅಶಿಸ್ತು ತೋರಿದರೆ ಶಿಸ್ತು ಕ್ರಮ ಕೈಗೊಳ್ಳಲಾಗುತ್ತದೆ. ಸಾರ್ವಜನಿಕರು ಸಣ್ಣಪುಟ್ಟ ಸಮಸ್ಯೆಗಳಿಗಾಗಿ ಜಿಲ್ಲಾ ಹಂತದ ಕಚೇರಿಗಳಿಗೆ, ಜನತಾ ದರ್ಶನಕ್ಕೆ ಬರುವುದು ಉಚಿತವಲ್ಲ. ಎಲ್ಲ ಅಧಿಕಾರಿ ಸಿಬ್ಬಂದಿಗಳು ತಮ್ಮ ಹಂತದಲ್ಲಿಯೇ ಸಾರ್ವಜನಿಕ ಸಮಸ್ಯೆಗಳನ್ನು ಸಂಯಮದಿಂದ ಆಲಿಸಿ ಪರಿಹರಿಸಬೇಕು. ಅಗತ್ಯವಿದ್ದಲ್ಲಿ ಮಾತ್ರ ಮೇಲಾಧಿಕಾರಿಗಳಿಗೆ ಶಿಫಾರಸ್ಸು ಮಾಡಿ ಕಳುಹಿಸಬೇಕೆಂದು ಅವರು ಹೇಳಿದರು.

ವಿವಿಧ ಗ್ರಾಮಗಳಿಂದ ಹಾಗೂ ನಗರ ಪ್ರದೇಶಗಳಿಂದ ಆಗಮಿಸಿದ್ದ ಸಾರ್ವಜನಿಕರು ತಮ್ಮ ವೈಯಕ್ತಿಕ ಸಮಸ್ಯೆಗಳನ್ನು ಹಾಗೂ ಮೂಲಭೂತ ಸೌಕರ್ಯಗಳ ಬಗ್ಗೆ ಅಹವಾಲುಗಳನ್ನು ಸಲ್ಲಿಸಿದರು.

ಮನವಿ ಸ್ವೀಕರಿಸಿದ ಜಿಲ್ಲಾ ಉಸ್ತುವಾರಿ ಸಚಿವರು, ಸಂಬಂಧಿಸಿದ ಅಧಿಕಾರಿಗಳನ್ನು ಕರೆದು, ಚರ್ಚಿಸಿ, ಇತ್ಯರ್ಥಕ್ಕೆ ನಿರ್ದೇಶಿಸಿದರು. ಇಂದಿನ ಜನತಾ ದರ್ಶನದಲ್ಲಿ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ 87ಕ್ಕೂ ಹೆಚ್ಚು ಅರ್ಜಿಗಳನ್ನು ಸ್ಥಳದಲ್ಲಿಯೇ ಪರಿಶೀಲಿಸಿ, ಪರಿಹಾರಕ್ಕೆ ಸೂಚಿಸಿದರು.

ಜಿಲ್ಲಾಧಿಕಾರಿ ಸ್ನೇಹಲ್ ಆರ್, ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ, ಐಎಎಸ್ ಪ್ರೊಬೇಷನರಿ ಅಧಿಕಾರಿ ರಿತಿಕಾ ವರ್ಮಾ, ಉಪವಿಭಾಗಾಧಿಕಾರಿ ಶಾಲಂ ಹಿಸೇನ್ ವೇದಿಕೆಯಲ್ಲಿದ್ದು, ಸಾರ್ವಜನಿಕ ಅಹವಾಲು ಇತ್ಯರ್ಥಪಡಿಸಲು ಸಚಿವರಿಗೆ ನೆರವಾದರು.

ಜನತಾ ದರ್ಶನದಲ್ಲಿ ವಿವಿಧ ನಗರ, ಗ್ರಾಮಗಳ ನಾಗರಿಕರು, ಸಂಘ ಸಂಸ್ಥೆಗಳ ಪ್ರತಿನಿಧಿಗಳು, ವಿವಿಧ ಇಲಾಖೆಗಳ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು, ಸಾರ್ವಜನಿಕರು ಭಾಗವಹಿಸಿದ್ದರು.

ಶಿರಸ್ತೆದಾರ ಮಲ್ಲಿಕಾರ್ಜುನ ಸೊಲಗಿ ಸ್ವಾಗತಿಸಿ, ಸಭೆ ನಿರ್ವಹಿಸಿದರು. ಶಿರಸ್ತೆದಾರರಾದ ಶ್ರೀಧರ ಕೆ ವಂದಿಸಿದರು. ಸಹಾಯಕ ನಿರ್ದೇಶಕ ರಾಜಶೇಖರ ಕಂಟೆಪ್ಪಗೌಡರ ಸಾರ್ವಜನಿಕ ಅಹವಾಲುಗಳನ್ನು ಕ್ರೋಢೀಕರಿಸಿ, ಜನತಾ ದರ್ಶನ ನಿರ್ವಹಿಸಿದರು.

87 ಅಹವಾಲು ಸ್ವೀಕಾರ

ಧಾರವಾಡ ಜಿಲ್ಲಾಡಳಿತದಿಂದ ಮಂಗಳವಾರ ಆಯೋಜಿಸಿದ್ದ ಜಿಲ್ಲಾ ಮಟ್ಟದ ಜನತಾ ದರ್ಶನದಲ್ಲಿ ಕಂದಾಯ ಇಲಾಖೆಯ 21, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆ 20, ನಗರಾಭಿವೃದ್ಧಿ ಇಲಾಖೆ 19, ವಸತಿ ಇಲಾಖೆ 7, ಸಾರಿಗೆ ಇಲಾಖೆ 4, ಗೃಹ ಇಲಾಖೆ ಮತ್ತು ಇಂಧನ ಇಲಾಖೆ 3 ಹಾಗೂ ಕೃಷಿ, ಶಾಲಾ ಶಿಕ್ಷಣ ಇಲಾಖೆ, ಆಹಾರ ಇಲಾಖೆಯ 2, ಹಿಂದುಳಿದ ವರ್ಗಗಳ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಆರೋಗ್ಯ ಇಲಾಖೆ, ಕಾರ್ಮಿಕ ಇಲಾಖೆಗಳ ತಲಾ ಒಂದು ಅಹವಾಲುಗಳು ಸೇರಿದಂತೆ ಒಟ್ಟು 87 ಅರ್ಜಿಗಳ ಸ್ವೀಕರಿಸಲಾಯಿತು. ಸ್ವೀಕರಿಸಿದ ಅರ್ಜಿಗಳನ್ನು ಕಾಲಮಿತಿಯಲ್ಲಿ ವಿಲೇವಾರಿ ಮಾಡಲು ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.

ಜಾತಕ ನೆಪದಲ್ಲಿ ಮದುವೆ ಕೈಬಿಟ್ಟರೆ ಕಾನೂನು ಕ್ರಮ ಖಚಿತ: ಹೈಕೋರ್ಟ್​ ತೀರ್ಪು

0

ನವದೆಹಲಿ: ಮದುವೆಯ ಭರವಸೆ ನೀಡಿ ಮಹಿಳೆಯೊಂದಿಗೆ ಲೈಂಗಿಕ ಸಂಬಂಧ ಹೊಂದಿ, ನಂತರ ಜಾತಿ ಅಥವಾ ಜಾತಕ ಹೊಂದಾಣಿಕೆಯಿಲ್ಲ ಎಂಬ ಕಾರಣ ಮುಂದಿಟ್ಟು ಮದುವೆಯನ್ನು ನಿರಾಕರಿಸುವುದು ಗಂಭೀರ ಅಪರಾಧ ಎಂದು ದೆಹಲಿ ಹೈಕೋರ್ಟ್ ಸ್ಪಷ್ಟವಾಗಿ ಹೇಳಿದೆ.

ನಿರಂತರವಾಗಿ ವಿವಾಹದ ಭರವಸೆ ನೀಡಿ ದೀರ್ಘಕಾಲ ಲೈಂಗಿಕ ಸಂಬಂಧ ಮುಂದುವರಿಸಿಕೊಂಡು, ಅಂತಿಮವಾಗಿ ಮದುವೆಗೆ ನಿರಾಕರಿಸುವುದು ಕಾನೂನುಬಾಹಿರ ಕೃತ್ಯವಾಗಿದ್ದು, ಇಂತಹ ಪ್ರಕರಣಗಳಲ್ಲಿ ಕೇವಲ ಪರಸ್ಪರ ಸಮ್ಮತಿಯನ್ನಷ್ಟೇ ಅಲ್ಲದೆ ಆರೋಪಿಯ ನಡವಳಿಕೆಯನ್ನು ಕೂಡ ನ್ಯಾಯಾಲಯ ಪರಿಶೀಲಿಸುತ್ತದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಈ ಸಂಬಂಧ ಭಾರತೀಯ ದಂಡ ಸಂಹಿತೆಯ ಅತ್ಯಾಚಾರ ವಿಧಾನದಡಿ ಹಾಗೂ ಭಾರತೀಯ ನ್ಯಾಯ ಸಂಹಿತೆಯ ಸಂಬಂಧಿತ ವಿಧಾನದಡಿ ಪ್ರಕರಣ ದಾಖಲಾಗಿದ್ದ ಆರೋಪಿಯ ಜಾಮೀನು ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದೆ.

ದೂರುದಾರ ಯುವತಿ ಹಲವು ಬಾರಿ ಮದುವೆಯ ಭರವಸೆ ನೀಡಿ ತನ್ನೊಂದಿಗೆ ಲೈಂಗಿಕ ಸಂಬಂಧ ಹೊಂದಲಾಗಿದೆ ಎಂದು ಆರೋಪಿಸಿದ್ದು, ಅಂತಿಮವಾಗಿ ಜಾತಕ ಹೊಂದಾಣಿಕೆಯಿಲ್ಲ ಎಂಬ ನೆಪ ಹೇಳಿ ಮದುವೆ ನಿರಾಕರಿಸಲಾಗಿದೆ ಎಂಬ ಅಂಶವನ್ನು ನ್ಯಾಯಾಲಯ ಗಂಭೀರವಾಗಿ ಪರಿಗಣಿಸಿದೆ. ಜಾತಕ ಅಥವಾ ಕುಟುಂಬದ ಅಭಿಪ್ರಾಯವೇ ಮುಖ್ಯವಾಗಿದ್ದರೆ ಅದನ್ನು ಮೊದಲೇ ಪರಿಶೀಲಿಸಬೇಕಿತ್ತು, ನಂತರ ಸುಳ್ಳು ಭರವಸೆ ನೀಡಿ ಸಂಬಂಧ ಮುಂದುವರಿಸುವುದು ಮೋಸಕ್ಕೆ ಸಮಾನ ಎಂದು ಕೋರ್ಟ್ ತಿಳಿಸಿದೆ.

ವಾಟ್ಸಾಪ್ ಸಂದೇಶಗಳಲ್ಲಿ ಕೂಡ ಶೀಘ್ರ ಮದುವೆಯ ಭರವಸೆ ನೀಡಿರುವುದು ದಾಖಲೆಗಳ ಮೂಲಕ ದೃಢಪಟ್ಟಿದ್ದು, ಈ ಎಲ್ಲ ಅಂಶಗಳು ಮಹಿಳೆಯ ಒಪ್ಪಿಗೆಯನ್ನು ತಪ್ಪು ಭರವಸೆಯ ಮೂಲಕ ಪಡೆದಿರುವ ಸಾಧ್ಯತೆಯನ್ನು ಸೂಚಿಸುತ್ತವೆ ಎಂದು ನ್ಯಾಯಾಲಯ ಹೇಳಿದೆ. ಹೀಗಾಗಿ ಆರೋಪಿಗೆ ಜಾಮೀನು ನೀಡಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ತೀರ್ಪು ನೀಡಿದ್ದು, ಇಂತಹ ಕೃತ್ಯಗಳು ಸಮಾಜದಲ್ಲಿ ಗಂಭೀರ ಪರಿಣಾಮ ಉಂಟುಮಾಡುತ್ತವೆ ಎಂಬ ಎಚ್ಚರಿಕೆಯನ್ನೂ ನೀಡಿದೆ.

ಕಾಂಗ್ರೆಸ್ ಸಂಘಟನೆಗೆ ಹೊಸ ನೇಮಕ: ಚಂದ್ರಪ್ಪ ದೊಡ್ಡಮನಿಗೆ ಜವಾಬ್ದಾರಿ

0

ಲಕ್ಷ್ಮೇಶ್ವರ: ತಾಲೂಕಿನ ಅಕ್ಕಿಗುಂದ ಗ್ರಾಮದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತ ಚಂದ್ರಪ್ಪ ಹೆಗ್ಗಪ್ಪ ದೊಡ್ಡಮನಿ ಅವರನ್ನು ಜಿಲ್ಲಾ ಕಾಂಗ್ರೆಸ್ ಸಮಿತಿ ಪರಿಶಿಷ್ಟ ಜಾತಿ ವಿಭಾಗದ ಜಿಲ್ಲಾ ಉಪಾಧ್ಯಕ್ಷರನ್ನಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಪರಿಶಿಷ್ಟ ಜಾತಿ ವಿಭಾಗದ ರಾಜ್ಯಾಧ್ಯಕ್ಷ ಆರ್. ಧರ್ಮಸೇನಾ ನೇಮಕ ಮಾಡಿ ಆದೇಶಪತ್ರ ನೀಡಿದರು. ಈ ಸಂದರ್ಭದಲ್ಲಿ ಕೆಪಿಸಿಸಿ ಸದಸ್ಯೆ ಸುಜಾತಾ ದೊಡ್ಡಮನಿ ಉಪಸ್ಥಿತರಿದ್ದರು.

ಶಿವಮೊಗ್ಗದಲ್ಲಿ ಶಾಲಾ ಬಾಲಕನ ಹತ್ಯೆ: 15 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

0

ಶಿವಮೊಗ್ಗ: ಶಿವಮೊಗ್ಗದಲ್ಲಿ ನಡೆದ ಶಾಲಾ ಬಾಲಕನ ಹತ್ಯೆ ಪ್ರಕರಣವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರವಾಗಿ ಖಂಡಿಸಿದ್ದಾರೆ. ಮೃತ ಬಾಲಕನ ಪೋಷಕರಿಗೆ ಸರ್ಕಾರದ ವತಿಯಿಂದ 15 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಅವರು ಘೋಷಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪ್ರಕಟಣೆ ಹೊರಡಿಸಿರುವ ಮುಖ್ಯಮಂತ್ರಿ, ಶಾಲಾ ವಿದ್ಯಾರ್ಥಿಯನ್ನು ಥಳಿಸಿ ಹತ್ಯೆಗೈದಿರುವುದು ಅತ್ಯಂತ ಅಮಾನವೀಯ ಕೃತ್ಯವಾಗಿದ್ದು, ಇದನ್ನು ತೀವ್ರವಾಗಿ ಖಂಡಿಸುತ್ತೇನೆ ಎಂದು ಹೇಳಿದ್ದಾರೆ. ಮೃತ ವಿದ್ಯಾರ್ಥಿಯ ಕುಟುಂಬಕ್ಕೆ ಅಗತ್ಯ ನೆರವು ಒದಗಿಸುವುದರ ಜೊತೆಗೆ, ಈ ಕೃತ್ಯದಲ್ಲಿ ಭಾಗಿಯಾದ ಪ್ರತಿಯೊಬ್ಬ ಅಪರಾಧಿಗೂ ಕಾನೂನಿನ ಮೂಲಕ ತಕ್ಕ ಶಿಕ್ಷೆ ದೊರಕುವಂತೆ ಕ್ರಮ ಕೈಗೊಳ್ಳಲಾಗುವುದು. ಬಾಲಕನ ಸಾವಿಗೆ ನ್ಯಾಯ ಒದಗಿಸಲು ಸರ್ಕಾರ ಪ್ರಾಮಾಣಿಕವಾಗಿ ಪ್ರಯತ್ನಿಸಲಿದೆ ಎಂದು ಭರವಸೆ ನೀಡಿದ್ದಾರೆ.

ಹತ್ಯೆಯಲ್ಲಿ ಭಾಗಿಯಾದವರು ಅಪ್ರಾಪ್ತ ವಯಸ್ಸಿನ ಹುಡುಗರಾಗಿದ್ದಾರೆ ಎಂಬ ಮಾಹಿತಿ ತೀವ್ರ ಆಘಾತ ಉಂಟುಮಾಡಿದೆ ಎಂದು ಅವರು ಹೇಳಿದ್ದಾರೆ. ಉತ್ತಮ ಶಿಕ್ಷಣ ಪಡೆದು ಭವಿಷ್ಯ ರೂಪಿಸಬೇಕಾದ ಮಕ್ಕಳು ದುಶ್ಚಟಗಳಿಗೆ ಒಳಗಾಗಿ ಕಾನೂನುಬಾಹಿರ ಕೃತ್ಯಗಳಲ್ಲಿ ತೊಡಗುತ್ತಿರುವುದು ದುರದೃಷ್ಟಕರ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಕೊಲೆಯ ಹಿಂದಿನ ಉದ್ದೇಶ ಏನೇ ಇರಲಿ, ಅಪರಾಧ ಎಸಗಿದವರು ಯಾರೇ ಆಗಿರಲಿ, ಕಾನೂನಿನ ಮೂಲಕ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಪೊಲೀಸ್ ಇಲಾಖೆಗೆ ಸೂಚನೆ ನೀಡಿರುವುದಾಗಿ ತಿಳಿಸಿದ್ದಾರೆ.

ಬಾಲ್ಯದಲ್ಲೇ ದ್ವೇಷ, ಹಿಂಸೆ ಮತ್ತು ಅಪರಾಧ ಪ್ರವೃತ್ತಿ ಬೆಳೆಸಿಕೊಳ್ಳುವುದು ಸಮಾಜಕ್ಕೆ ಅತ್ಯಂತ ಅಪಾಯಕಾರಿ ಎಂದು ಎಚ್ಚರಿಕೆ ನೀಡಿದ ಅವರು, ಪೋಷಕರು ತಮ್ಮ ಮಕ್ಕಳ ಚಲನವಲನಗಳ ಮೇಲೆ ನಿಗಾ ವಹಿಸಬೇಕು ಎಂದಿದ್ದಾರೆ. ಮಕ್ಕಳು ತಪ್ಪು ಹಾದಿ ಹಿಡಿದರೆ ತಕ್ಷಣ ತಿದ್ದಿ ಬುದ್ದಿ ಹೇಳುವ ಜವಾಬ್ದಾರಿ ಪೋಷಕರದ್ದು ಎಂದು ಹೇಳಿದ್ದಾರೆ. ಅಲ್ಲದೆ ಶಾಲೆಗಳ ಸುತ್ತಮುತ್ತ ಯಾವುದೇ ಕಾನೂನುಬಾಹಿರ ಚಟುವಟಿಕೆಗಳು ನಡೆಯದಂತೆ ಆಡಳಿತ ಮಂಡಳಿಗಳು ಕಟ್ಟುನಿಟ್ಟಾಗಿ ನಿಗಾ ವಹಿಸಬೇಕು, ಅಗತ್ಯವಿದ್ದರೆ ಪೊಲೀಸ್ ನೆರವು ಪಡೆಯಬೇಕು ಎಂದು ಸಲಹೆ ನೀಡಿದ್ದಾರೆ.

ಮಗನನ್ನು ಕಳೆದುಕೊಂಡ ದುಃಖದಲ್ಲಿರುವ ಕುಟುಂಬವನ್ನು ಸಾಂತ್ವನಪಡಿಸುವ ಉದ್ದೇಶದಿಂದ ಸರ್ಕಾರದ ವತಿಯಿಂದ ಮೃತ ಬಾಲಕನ ಪೋಷಕರಿಗೆ 15 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ. ಈ ದುಷ್ಕೃತ್ಯದಲ್ಲಿ ಭಾಗಿಯಾದ ಎಲ್ಲ ಆರೋಪಿಗಳನ್ನು ಈಗಾಗಲೇ ಬಂಧಿಸಲಾಗಿದ್ದು, ನಿಷ್ಪಕ್ಷಪಾತ ತನಿಖೆ ನಡೆಸಿ ಗರಿಷ್ಠ ಶಿಕ್ಷೆ ದೊರಕುವಂತೆ ನೋಡಿಕೊಳ್ಳಲಾಗುವುದು ಎಂಬ ಭರವಸೆಯನ್ನು ಆ ನೊಂದ ಕುಟುಂಬಕ್ಕೆ ನೀಡಿರುವುದಾಗಿ ತಿಳಿಸಿದ್ದಾರೆ.

ಸಾರ್ವಜನಿಕರು ಯಾವುದೇ ಪ್ರಚೋದನೆಗಳಿಗೆ ಒಳಗಾಗದೆ ಶಾಂತಿ ಮತ್ತು ಸಂಯಮದಿಂದ ವರ್ತಿಸಬೇಕು ಎಂದು ಮನವಿ ಮಾಡಿದ ಅವರು, ಪರಿಸ್ಥಿತಿಯನ್ನು ದುರುಪಯೋಗಪಡಿಸಿಕೊಂಡು ಸಾರ್ವಜನಿಕ ಶಾಂತಿಗೆ ಭಂಗ ಉಂಟುಮಾಡುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಕಲಿಕಾ ಹಬ್ಬದಿಂದ ಹೊಸ ಕಲಿಕೆಗೆ ಪ್ರೇರಣೆ

0

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಲಕ್ಷ್ಮೇಶ್ವರ ಉತ್ತರ ಕ್ಲಸ್ಟರ್ ಮಟ್ಟದ ಎಫ್‌ಎಲ್‌ಎನ್ ಕಲಿಕಾ ಹಬ್ಬದ ಸ್ಪರ್ಧಾ ಕಾರ್ಯಕ್ರಮವನ್ನು ಸರ್ಕಾರಿ ಹಿರಿಯ ಮಾದರಿ ಪ್ರಾಥಮಿಕ ಶಾಲೆ ನಂ.1ರಲ್ಲಿ ಮಂಗಳವಾರ ಆಯೋಜಿಸಲಾಗಿತ್ತು.

ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ್ ಮಾತನಾಡಿ, ಪಾಲಕರು ಮಕ್ಕಳೊಂದಿಗೆ ಬೆರೆತು ಕಲಿಕೆಯ ದೃಢೀಕರಣ ನೀಡುವ ಉತ್ತೇಜಕ ಕಾರ್ಯಕ್ರಮ ಇದಾಗಿದೆ. ಹಬ್ಬದ ವಾತಾವರಣದಲ್ಲಿ ವಿವಿಧ ಶಾಲೆಯ ಮಕ್ಕಳು, ಪಾಲಕರು, ಶಿಕ್ಷಕರು ಎಸ್‌ಡಿಎಂಸಿಯ ಸಹಭಾಗಿತ್ವದಲ್ಲಿ ಮಕ್ಕಳ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹ ನೀಡುವುದು, ಆತ್ಮವಿಶ್ವಾಸ ಬೆಳೆಸುವುದು, ಶಾಲೆಯ ಸಾಧನೆಗಳ ಚಿತ್ರಣ ಅನಾವರಣಗೊಳಿಸುವ ಸದಾಶಯವೇ ಕಲಿಕಾ ಹಬ್ಬವಾಗಿದೆ. ಇದರಲ್ಲಿ ಮಕ್ಕಳು ಉತ್ಸಾಹದಿಂದ ಪಾಲ್ಗೊಂಡು ತಮ್ಮ ಪ್ರತಿಭೆಯನ್ನು ಬೆಳಗುವುದರ ಜೊತೆಗೆ ಹೊಸ ಹೊಸ ಕಲಿಕೆಗೆ ಪ್ರೇರಣೆ ದೊರೆಯುತ್ತದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್‌ಡಿಎಂಸಿ ಅಧ್ಯಕ್ಷ ಯಲ್ಲಪ್ಪ ಶಿರಬಡಗಿ ವಹಿಸಿದ್ದರು. ವೇದಿಕೆಯಲ್ಲಿ ಇಸಿಓ ರಾಘವೇಂದ್ರ ಜೋಶಿ, ಆರ್.ಬಿ. ಪವಾರ, ಎಮ್.ಡಿ. ವಾರದ, ಬಸವರಾಜ ಕುಂಬಾರ, ಚಂದ್ರಕಾತ ನೇಕಾರ, ಬಿಆರ್‌ಪಿ ಬಿ.ಎಮ್. ಯರಗುಪ್ಪಿ, ಎಮ್.ಎ. ನದಾಫ್, ಬಿ.ಬಿ. ಯತ್ನಳ್ಳಿ, ಎ.ಎಮ್. ಅಕ್ಕಿ, ಎಸ್.ಡಿ. ಲಮಾಣಿ, ಸಿಆರ್‌ಪಿಗಳಾದ ಸಿ.ವಿ. ವಡಕಣ್ಣವರ, ಆರ್. ಮಹಾಂತೇಶ, ಎನ್.ಎ. ಮುಲ್ಲಾ, ಗಿರೀಶ್ ನೇಕಾರ, ತಿರಕಪ್ಪ ಪ್ರಜಾರ, ನವೀನ ಅಂಗಡಿ, ಜ್ಯೋತಿ ಗಾಯಕವಾಡ, ಶ್ರೀನಿವಾಸ ಮತ್ತೂರ, ಸತೀಶ ಬೊಮಲೆ, ಎಫ್.ಎಚ್. ನದಾಫ್, ಎಸ್.ಎಸ್. ಮಹಾಲಿಂಗಶೆಟ್ಟರ, ಈ.ಎಚ್. ಪೀಟರ್, ಅಕ್ಷತಾ ಕಾಟೇಗಾರ, ಕುದಿಯಾ ಆಶ್ಮೀನ್ ನದಾಫ್ ಮುಂತಾದವರಿದ್ದರು.

ಉತ್ತರ ಕ್ಲಸ್ಟರ್ ಸಿಆರ್‌ಪಿ ಉಮೇಶ ನೇಕಾರ ಪ್ರಾಸ್ತಾವಿಕವಾಗಿ ಮಾತನಾಡಿದರು. ಮುಖ್ಯೋಪಾಧ್ಯಾಯ ಡಿ.ಎನ್. ದೊಡ್ಡಮನಿ ಸ್ವಾಗತಿಸಿದರು. ಆರ್.ಬಿ. ಅಡರಕಟ್ಟಿ ಮತ್ತು ಎನ್.ಎಸ್. ಬಂಕಾಪುರ ನಿರೂಪಿಸಿದರು. ಎಸ್.ಎಮ್. ಬೊಮಲೆ ವಂದಿಸಿದರು.

ಕ.ರಾ.ಸ.ನೌ ಸಂಘದ ಅಧ್ಯಕ್ಷ ಗುರುರಾಜ ಹವಳದ ಮತ್ತು ಕ.ರಾ.ಪ್ರಾ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಬಿ.ಎಸ್. ಹರ್ಲಾಪುರ ಮಾತನಾಡಿ, ಕಲಿಕೆಯಲ್ಲಿ ಹಿಂದಿರುವ ಮಕ್ಕಳು ತಮ್ಮ ಮೂಲ ಸಾಮರ್ಥ್ಯವನ್ನು ಸಾಧಿಸಲು ಇದು ತುಂಬಾ ಸಹಕಾರಿಯಾಗಿದೆ. ಮಕ್ಕಳ ಪಾಲಕರು ಸರ್ಕಾರಿ ಶಾಲೆಗಳ ಬಗ್ಗೆ ಒಲವು ತೋರಿಸಿ, ಆದಷ್ಟು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ದಾಖಲಿಸಬೇಕು. ಇಂತಹ ಕಾರ್ಯಕ್ರಮಗಳಲ್ಲಿ ಪಾಲಕರು ಭಾಗವಹಿಸುವಂತೆ ಮಾಡಬೇಕು ಎಂದು ಹೇಳಿದರು.

‘ಉತ್ಕರ್ಷತೆಯೆಡೆಗೆ’ ವಿದ್ಯಾರ್ಥಿ ಸ್ನೇಹಿ ಕಾರ್ಯಾಗಾರ

0

ವಿಜಯಸಾಕ್ಷಿ ಸುದ್ದಿ, ಗದಗ: ಗದಗ ಜಿಲ್ಲಾ ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷರಾದ ಕೃಷ್ಣಗೌಡ ಹೆಚ್. ಪಾಟೀಲ ಅವರ ವೈಯಕ್ತಿಕ ಆಸಕ್ತಿಯಿಂದ 10ನೇ ತರಗತಿ ವಿದ್ಯಾರ್ಥಿಗಳ ಉತ್ತಮ ಫಲಿತಾಂಶಕ್ಕಾಗಿ ‘ಉತ್ಕರ್ಷತೆಯೆಡೆಗೆ’ ವಿದ್ಯಾರ್ಥಿ ಸ್ನೇಹಿ ಕಾರ್ಯಾಗಾರವನ್ನು 3 ದಿನಗಳ ಕಾಲ ಎಲ್ಲಾ ಶಾಲೆಗಳ ವಿದ್ಯಾರ್ಥಿಗಳಿಗೆ ಆಯೋಜಿಸಲಾಗಿತ್ತು.

ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಪರೀಕ್ಷೆಯನ್ನು ಸಮರ್ಥವಾಗಿ ಎದುರಿಸುವ ಕುರಿತು ಸಲಹೆ-ಸೂಚನೆಗಳನ್ನು ನೀಡುವುದರ ಮೂಲಕ ವಿದ್ಯಾರ್ಥಿಗಳಲ್ಲಿ ಪರೀಕ್ಷೆಯ ಭಯವನ್ನು ಹೋಗಲಾಡಿಸಲು ಪ್ರಯತ್ನಿಸಲಾಯಿತು. ಜೊತೆಗೆ, ಇದು ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸವನ್ನು ಮೂಡಿಸಲು ಸಹಕಾರಿ ಆಯಿತು.

ಈ ಕಾರ್ಯಾಗಾರದಿಂದ ಉತ್ತಮ ಫಲಿತಾಂಶ ದೊರೆಯಲಿದೆ ಎಂಬ ಭರವಸೆ ವ್ಯಕ್ತವಾಗಿದೆ. ಇದು ನಮ್ಮ ಯುವ ನಾಯಕರ ದೂರದೃಷ್ಟಿ ಹಾಗೂ ವಿದ್ಯಾರ್ಥಿಗಳ ಮೇಲಿರುವ ಕಾಳಜಿಯನ್ನು ತೋರಿಸುತ್ತದೆ ಎಂದು ಗದಗ ಬೆಟಗೇರಿ ಬ್ಲಾಕ್ ಯುವ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಅನ್ವರ್ ನದಾಫ್ ಹಾಗೂ ಅಭಿಷಯ್ ತಿಳಿಸಿದ್ದಾರೆ.

ರಾಷ್ಟ್ರೀಯ ಮಹಿಳಾ ಸಮ್ಮೇಳನದ ಸರ್ವಾಧ್ಯಕ್ಷರಾಗಿ ವೀಣಾ ಹೇಮಂತಗೌಡ ಪಾಟೀಲ ಆಯ್ಕೆ

0

ವಿಜಯಸಾಕ್ಷಿ ಸುದ್ದಿ, ಗದಗ: ಕಪ್ಪತ್ತಗಿರಿ ಫೌಂಡೇಶನ್ ವತಿಯಿಂದ ಮಾರ್ಚ್ ತಿಂಗಳಲ್ಲಿ ಆಯೋಜಿಸಿರುವ 5ನೇ ರಾಷ್ಟ್ರೀಯ ಮಹಿಳಾ ಸಮ್ಮೇಳನಕ್ಕೆ ಮುಂಡರಗಿಯ ವೀಣಾ ಹೇಮಂತಗೌಡ ಪಾಟೀಲ ಅವರು ಸರ್ವಾಧ್ಯಕ್ಷರಾಗಿ ಆಯ್ಕೆ ಆಗಿದ್ದು, ಗದಗ ನಗರದಲ್ಲಿ ಮಾರ್ಚ್ 22ರಂದು ನಡೆಯುವ ಮಹಿಳಾ ಸಮ್ಮೇಳನಕ್ಕೆ ಅವರನ್ನು ಅಧಿಕೃತವಾಗಿ ಗೌರವಿಸಿ ಆಹ್ವಾನಿಸಲಾಯಿತು.

ಕಾರ್ಯಕ್ರಮದಲ್ಲಿ ಕಪ್ಪತ್ತಗಿರಿ ಫೌಂಡೇಶನ್‌ನ ಗದಗ ಜಿಲ್ಲಾ ಅಧ್ಯಕ್ಷರಾದ ಮಮತಾ ದೊಡ್ಡಮನಿ, ಶಿರಹಟ್ಟಿ ತಾಲೂಕು ಅಧ್ಯಕ್ಷರಾದ ಶಾಂತಾ ಅಂಗಡಿ, ಗೌರವ ಅಧ್ಯಕ್ಷರಾದ ಕಾವ್ಯ ಅಂಗಡಿ, ಗದುಗಿನ ಹಿರಿಯ ಸಾಹಿತಿಗಳಾದ ಎ.ಎಸ್. ಮಕಾನದಾರ, ಕಪ್ಪತ್ತಗಿರಿ ಫೌಂಡೇಶನ್ ನಿರ್ದೇಶಕರಾದ ತೋಟಯ್ಯ ಗುಡ್ಡಿಮಠ, ಹೇಮಂತ್‌ಗೌಡ ಪಾಟೀಲ್, ಕಾವೇರಿ ಬೋಲ, ಮಧುಮತಿ ಇಳಕಲ್ ಉಪಸ್ಥಿತರಿದ್ದರು ಎಂದು ಕಪ್ಪತ್ತಗಿರಿ ಫೌಂಡೇಶನ್ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಚಂದ್ರಕಲಾ ಇಟಗಿಮಠ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಮಗೆ ಯಾವುದೇ ರಾಜಕೀಯ ಪಕ್ಷದ ಒಲವಿಲ್ಲ

0

ವಿಜಯಸಾಕ್ಷಿ ಸುದ್ದಿ, ಗದಗ: ಗುತ್ತಿಗೆದಾರರ ಸಂಘದ ರಾಜ್ಯಾಧ್ಯಕ್ಷ ಆರ್. ಮಂಜುನಾಥರನ್ನು ನಗರದ ಪ್ರವಾಸಿ ಮಂದಿರದಲ್ಲಿ ಗದಗ ಜಿಲ್ಲಾ ಗುತ್ತಿಗೆದಾರರ ಸಂಘದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಗದಗ ಜಿಲ್ಲಾ ಗುತ್ತಿಗೆದಾರರು ನನಗೆ ತೋರಿದ ಪ್ರೀತಿ, ವಿಶ್ವಾಸಕ್ಕೆ ಅಭಾರಿಯಾಗಿದ್ದೇನೆ. ಇವತ್ತು ಗುತ್ತಿಗೆದಾರರು ಬಹಳ ಆರ್ಥಿಕ ತೊಂದರೆಯಲ್ಲಿ ಸಿಲುಕಿಕೊಂಡಿದ್ದೇವೆ. ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ವತಿಯಿಂದ ಗುತ್ತಿಗೆದಾರರಿಗೆ ಸುಮಾರು 37 ಸಾವಿರ ಕೋಟಿ ರೂಪಾಯಿ ಹಣ ಬಾಕಿ ಉಳಿದಿದ್ದು, ಇಂದು ಅನೇಕ ಗುತ್ತಿಗೆದಾರರು ತಮ್ಮ ಮನೆಯಲ್ಲಿರುವ ಬಂಗಾರವನ್ನು ಅಡವಿಟ್ಟು ರಾಜ್ಯದ ಅಭಿವೃದ್ಧಿಗಾಗಿ ವಿವಿಧ ಕಾಮಗಾರಿಗಳನ್ನು ನೆರವೇರಿಸಿದ್ದಾರೆ. ಈಗ ಅದರ ಬಡ್ಡಿ ಕಟ್ಟುತ್ತಿದ್ದಾರೆ. ನಮಗೆ ಯಾವುದೇ ರಾಜಕೀಯ ಪಕ್ಷದ ಒಲವು ಇಲ್ಲ. ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಅಥವಾ ಇತರೆ ಯಾವುದೇ ಪಕ್ಷಗಳನ್ನು ನಾವು ಹೊಗಳುವುದಿಲ್ಲ, ದೂಷಿಸುವುದಿಲ್ಲ ಎಂದು ಹೇಳಿದರು.

ಸರ್ಕಾರಗಳು ನೀಡಿದ ಕೆಲಸಗಳನ್ನು ನಾವು ಪ್ರಾಮಾಣಿಕವಾಗಿ ನಿರ್ವಹಿಸಿದ್ದೇವೆ. ರಾಜ್ಯ ಸರ್ಕಾರ ಆದಷ್ಟು ಬೇಗ ನಮ್ಮ ಬಾಕಿ ಹಣವನ್ನು ಕೊಟ್ಟು ಗುತ್ತಿಗೆದಾರರನ್ನು ಸಂಕಷ್ಟದಿಂದ ಪಾರು ಮಾಡಬೇಕಾಗಿದೆ. ದಿನಕಳೆದಂತೆ ಗುತ್ತಿಗೆದಾರರ ಆರ್ಥಿಕ ಸಂಕಷ್ಟ ದೊಡ್ಡ ಪ್ರಮಾಣದಲ್ಲಿ ಆಗಲಿದೆ. ರಾಜ್ಯದ ಮುಖ್ಯಮಂತ್ರಿಗಳು, ಸರ್ಕಾರದ ವಿವಿಧ ಇಲಾಖೆಯ ಸಚಿವರು ಮುತುವರ್ಜಿ ವಹಿಸಿ ಗುತ್ತಿಗೆದಾರರ ಹಣವನ್ನು ಪಾವತಿಸುವಂತೆ ಕ್ರಮ ಕೈಗೊಳ್ಳಬೇಕೆಂದು ವಿನಂತಿಸಿದರು.

ಈ ಸಂದರ್ಭದಲ್ಲಿ ಸಿದ್ದು ಪಾಟೀಲ, ವಿ.ಜಿ. ಮುಲ್ಕಿಪಾಟೀಲ, ಏ.ಬಿ. ಕಟಗಿ, ಆರ್.ಡಿ. ರಂಗಪ್ಪನವರ್, ಬಿ.ವಾಯ್. ಶಿರಗುಂಪಿ, ಸುರೇಶ ತಿರ್ಲಾಪುರ, ಬಸವರಾಜ ಮೇಟಿ, ಎ.ಎಚ್. ಪಾಟೀಲ, ಬಿ.ಆರ್. ಹೊಸಮನಿ, ಬಸವರಡ್ಡಿ ಹಂಚಿನಾಳ, ಅನ್ನಪ್ಪ ದಾರಿಯನ್ನವರ, ಸಿ.ಎಸ್. ನಾಗಾವಿ, ಎಂ.ಎಸ್. ಮಾದನ್ನವರ, ಯುವರಾಜ ಬಳ್ಳಾರಿ, ವಿಶ್ವನಾಥ ಪಾಟೀಲ, ಬೆಳಹುಣಸಿ, ಹೊಸಂಗಡಿ, ಗುರನ್ನ ಕುರ್ತಕೋಟಿ, ದಾಯಮ್ಮನವರ, ಎಮ್.ವ್ಹಿ. ಗಾಣಿಗೇರ, ಎಸ್.ಎಚ್. ಪಾಟೀಲ್, ಬಿರಾದಾರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಸರಿಪಡಿಸಿದ ಪದಗಳ ಪಟ್ಟಿ:

error: Content is protected !!