ವಿಜಯಸಾಕ್ಷಿ ಸುದ್ದಿ, ಗದಗ: 12ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ-2026ರ ಅಂಗವಾಗಿ ಆಯುಷ್ ಇಲಾಖೆ ವತಿಯಿಂದ ಬೆಟಗೇರಿಯ ಶಿವರತ್ನ ವೃದ್ಧಾಶ್ರಮದಲ್ಲಿ ಉಚಿತ ಆರೋಗ್ಯ ತಪಾಸಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಭಾರತ ಸರ್ಕಾರ, ಕರ್ನಾಟಕ ಸರ್ಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಯುಷ್ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಇವರ ಸಹಯೋಗದಲ್ಲಿ ‘ಆರೋಗ್ಯಕರ ವೃದ್ಧಾಪ್ಯಕ್ಕಾಗಿ ಯೋಗ’ ಎಂಬ ಘೋಷವಾಕ್ಯದಡಿ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಆಯುಷ್ ಅಧಿಕಾರಿ ಡಾ. ಜುಬೇದಾ ತಿಗಳೇರ, ಆರೋಗ್ಯ ಮತ್ತು ಅನಾರೋಗ್ಯಕ್ಕೆ ಆಹಾರ ಪದ್ಧತಿ ಹಾಗೂ ಜೀವನಶೈಲಿಯೇ ಪ್ರಮುಖ ಕಾರಣಗಳಾಗಿವೆ. ಆಯುರ್ವೇದದ ಪ್ರಕಾರ ದೇಹದಲ್ಲಿನ ವಾತ, ಪಿತ್ತ ಹಾಗೂ ಕಫಗಳ ಸಮತೋಲನ ಆರೋಗ್ಯಕ್ಕೆ ಕಾರಣವಾಗುತ್ತದೆ. ನಿಯಮಿತ ಆಹಾರ ಮತ್ತು ಉತ್ತಮ ಜೀವನಶೈಲಿಯು ಆರೋಗ್ಯವನ್ನು ಕಾಪಾಡಿದರೆ, ಅನಿಯಮಿತ ಆಹಾರ ಮತ್ತು ಅಭ್ಯಾಸಗಳು ಅನಾರೋಗ್ಯಕ್ಕೆ ಕಾರಣವಾಗುತ್ತವೆ ಎಂದು ತಿಳಿಸಿದರು.
ಯೋಗ ದಿನಾಚರಣೆಯ ಪೂರ್ವಭಾವಿಯಾಗಿ ಜೂನ್ 20ರಂದು ಬೆಳಿಗ್ಗೆ 9 ಗಂಟೆಗೆ ನಗರದ ಮುನ್ಸಿಪಲ್ ಕಾಲೇಜು ಆವರಣದಿಂದ ಯೋಗ ಜಾಥಾ ಹಮ್ಮಿಕೊಳ್ಳಲಾಗಿದೆ. ಗಾಂಧಿ ಸರ್ಕಲ್, ರೋಟರಿ ಸರ್ಕಲ್, ಹಳೆ ಬಸ್ ನಿಲ್ದಾಣ, ಟಾಂಗಾ ಕೂಟ, ಮಹೇಂದ್ರಕರ ಸರ್ಕಲ್ ಹಾಗೂ ಶಹಪೂರ ಪೇಟೆ ಮಾರ್ಗವಾಗಿ ಸಂಚರಿಸಿ ಮತ್ತೆ ಮುನ್ಸಿಪಲ್ ಕಾಲೇಜು ಆವರಣದಲ್ಲಿ ಜಾಥಾ ಸಮಾರೋಪಗೊಳ್ಳಲಿದೆ.
ಜೂನ್ 21ರಂದು ಬೆಳಿಗ್ಗೆ 6.30ಕ್ಕೆ ನಗರದ ಕೆ.ಎಚ್. ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ 12ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಜಿಲ್ಲಾ ಮಟ್ಟದ ಕಾರ್ಯಕ್ರಮ ನಡೆಯಲಿದೆ.
ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಗದಗ-ಬೆಟಗೇರಿ ನಗರಸಭೆ, ಜಿಲ್ಲೆಯ ವಿವಿಧ ಯೋಗ ಸಂಸ್ಥೆಗಳು, ಆಯುರ್ವೇದ ಮಹಾವಿದ್ಯಾಲಯಗಳು, ನರ್ಸಿಂಗ್ ಕಾಲೇಜುಗಳು, ಪ್ರಕೃತಿ ಚಿಕಿತ್ಸಾ ಕೇಂದ್ರಗಳು, ಎನ್ಎಸ್ಎಸ್, ಸ್ಕೌಟ್ಸ್ ಮತ್ತು ಗೈಡ್ಸ್, ನೆಹರು ಯುವ ಕೇಂದ್ರ, ಪ್ರಜಾಪಿತ ಬ್ರಹ್ಮಕುಮಾರಿ ಸಂಸ್ಥೆ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಹಾಗೂ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ.
“ನಿಯಮಿತ ಯೋಗಾಭ್ಯಾಸ ಮತ್ತು ಆರೋಗ್ಯಕರ ಜೀವನಶೈಲಿಯು ಉತ್ತಮ ಆರೋಗ್ಯದ ಮೂಲ. ಯೋಗವು ದೈಹಿಕ ಹಾಗೂ ಮಾನಸಿಕ ಆರೋಗ್ಯ ವೃದ್ಧಿಗೆ ಅತ್ಯುತ್ತಮ ಸಾಧನವಾಗಿದೆ.”
– ಡಾ. ಜುಬೇದಾ ತಿಗಳೇರ, ಜಿಲ್ಲಾ ಆಯುಷ್ ಅಧಿಕಾರಿ, ಗದಗ

