Home Blog

ಕಾಡುಕೋಣ ದಾಳಿಗೆ ಮಹಿಳೆ ಬಲಿ; ಚಿಕ್ಕಮಗಳೂರಿನ ಕಳಸದಲ್ಲಿ ಹೆಚ್ಚಿದ ಆತಂಕ!

ಚಿಕ್ಕಮಗಳೂರು: ಕಾಡುಕೋಣ ದಾಳಿಗೆ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಕಳಸ ತಾಲೂಕಿನ ಬಿಳಗುಳಿ ಗ್ರಾಮದ ಬಳಿ ನಡೆದಿದೆ.

ಮೃತರನ್ನು ಶೀಲಾ (52) ಎಂದು ಗುರುತಿಸಲಾಗಿದೆ. ಅವರು ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಏಕಾಏಕಿ ಕಾಡುಕೋಣ ದಾಳಿ ನಡೆಸಿದೆ. ದಾಳಿಯಿಂದ ಮಹಿಳೆಯ ಹೊಟ್ಟೆ ಹಾಗೂ ಕತ್ತಿನ ಭಾಗಕ್ಕೆ ಗಂಭೀರ ಗಾಯಗಳಾಗಿವೆ.

ತಕ್ಷಣ ಸ್ಥಳೀಯರು ಗಾಯಾಳುವನ್ನು ಆಸ್ಪತ್ರೆಗೆ ಕರೆದೊಯ್ಯಲು ಮುಂದಾದರೂ, ಮಾರ್ಗಮಧ್ಯೆಯೇ ತೀವ್ರ ರಕ್ತಸ್ರಾವದಿಂದ ಮೃತಪಟ್ಟಿದ್ದಾರೆ.

ಈ ಸಂಬಂಧ ಕಳಸ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಕೂಡ ಮಾಹಿತಿ ಸಂಗ್ರಹಿಸುತ್ತಿದ್ದಾರೆ.

ಕಾಡುಕೋಣ ದಾಳಿ ಪ್ರಕರಣಗಳು ಹೆಚ್ಚಳ:

ಕಳಸ ತಾಲೂಕಿನಲ್ಲಿ ಕಾಡುಕೋಣಗಳ ಹಾವಳಿ ನಿರಂತರವಾಗಿ ಮುಂದುವರಿದಿದೆ. ಕಳೆದ ಏಪ್ರಿಲ್‌ನಲ್ಲಿ ಕಳಸ ತಾಲೂಕಿನ ಮೈದಾಡಿಯ ಯಮಗೊಂಡ ಎಸ್ಟೇಟ್‌ನಲ್ಲಿ ಯುವಕನೊಬ್ಬ ಕಾಡುಕೋಣ ದಾಳಿಗೆ ಬಲಿಯಾಗಿದ್ದ.

ಇದಕ್ಕೂ ಮುನ್ನ ಹಲವು ಮಂದಿ ಕಾಡುಕೋಣ ದಾಳಿಯಿಂದ ಗಾಯಗೊಂಡಿದ್ದಾರೆ. ಪದೇ ಪದೇ ನಡೆಯುತ್ತಿರುವ ಘಟನೆಗಳಿಂದ ಮಲೆನಾಡು ಭಾಗದ ಜನರಲ್ಲಿ ಆತಂಕ ಹೆಚ್ಚಾಗಿದೆ.

ಕಾಡುಕೋಣಗಳ ಹಾವಳಿಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಸ್ಥಳೀಯರು ಅರಣ್ಯ ಇಲಾಖೆಗೆ ಒತ್ತಾಯಿಸಿದ್ದಾರೆ.

ಜು.20ರಿಂದ ಮನೆ-ಮನೆಗೆ ರಾಯರ ಪಾದುಕೆ ಪೂಜೆ

ವಿಜಯಸಾಕ್ಷಿ ಸುದ್ದಿ, ಗದಗ”: ಕಲಿಯುಗದ ಕಾಮಧೇನು, ಕಲ್ಪವೃಕ್ಷ ಹಾಗೂ ಅಪಮೃತ್ಯು ಪರಿಹಾರದ ಗುರು ಎಂದೇ ಆರಾಧಿಸಲ್ಪಡುವ ಶ್ರೀ ರಾಘವೇಂದ್ರ ಸ್ವಾಮಿಗಳ 355ನೇ ಆರಾಧನಾ ಮಹೋತ್ಸವದ ಅಂಗವಾಗಿ ಗದಗ ನಗರದ ಕಳಸಾಪೂರ ರಸ್ತೆಯಲ್ಲಿರುವ ಮಂತ್ರಾಲಯ ರಾಘವೇಂದ್ರ ಸ್ವಾಮಿಗಳ ಶಾಖಾ ಮಠದಿಂದ ಭಕ್ತರ ಮನೆ-ಮನೆಗೆ ರಜತ ಪಾದುಕೆ ಪೂಜೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಆರಾಧನಾ ಮಹೋತ್ಸವದ ಪ್ರಯುಕ್ತ ರಜತ ಪ್ರಹ್ಲಾದರಾಯರ ಮೂರ್ತಿ, ರಜತ ಬೃಂದಾವನ ಹಾಗೂ ರಜತ ಪಾದುಕೆಗಳನ್ನು ಭಕ್ತರ ಮನೆಗಳಿಗೆ ಕೊಂಡೊಯ್ದು ವಿಶೇಷ ಪೂಜೆ ನೆರವೇರಿಸಲಾಗುವುದು. ಈ ಸೇವೆಯಿಂದ ಭಕ್ತರಿಗೆ ಶ್ರೀ ರಾಘವೇಂದ್ರ ಸ್ವಾಮಿಗಳ ಕೃಪೆಗೆ ಪಾತ್ರರಾಗುವ ಅಪೂರ್ವ ಅವಕಾಶ ದೊರೆಯಲಿದೆ.

ಮಂತ್ರಾಲಯ ಪೀಠಾಧಿಪತಿಗಳಾದ ಶ್ರೀ ಶ್ರೀ ಸುಭುದೇಂದ್ರ ತೀರ್ಥ ಶ್ರೀಗಳ ಅಪ್ಪಣೆಯಂತೆ ಈ ವಿಶೇಷ ಪೂಜಾ ಸೇವೆ ಆಯೋಜಿಸಲಾಗಿದ್ದು, ಭಕ್ತರು ರಾಯರ ಪಾದುಕೆಗಳನ್ನು ಪೂಜಿಸಿ ಆಶೀರ್ವಾದ ಪಡೆಯುವಂತೆ ಮಠ ಮನವಿ ಮಾಡಿದೆ.

ಜುಲೈ 20ರಿಂದ ಆಗಸ್ಟ್ 28ರವರೆಗೆ ಮನೆ-ಮನೆಗೆ ಪಾದುಕೆ ಪೂಜೆ ನಡೆಯಲಿದೆ. ಪೂಜೆ ಮಾಡಿಸಿಕೊಳ್ಳಲು ಆಸಕ್ತ ಭಕ್ತರು ಮುಂಚಿತವಾಗಿ ಕಳಸಾಪೂರ ರಸ್ತೆಯ ರಾಘವೇಂದ್ರ ಶಾಖಾ ಮಠದ ಕಾರ್ಯಾಲಯದಲ್ಲಿ ಹೆಸರು ನೋಂದಾಯಿಸಿಕೊಳ್ಳಬೇಕು.

ಹೆಚ್ಚಿನ ಮಾಹಿತಿಗಾಗಿ ಶಾಖಾ ಮಠದ ಆಚಾರ್ಯ ನಂಜನಗೂಡು ಅನಿಲ ಆಚಾರ್ಯ ಅವರನ್ನು ಮೊ. 97392 74755ರಲ್ಲಿ ಸಂಪರ್ಕಿಸಬಹುದಾಗಿದೆ.

ನೀರಿಲ್ಲದೆ ಕಂಗಾಲಾಗಿದ್ದ ಜನರಿಗೆ ಗುಡ್ ನ್ಯೂಸ್; ಆಲಮಟ್ಟಿಗೆ ಹೆಚ್ಚಿದ ಒಳಹರಿವು!

ವಿಜಯಪುರ: ಮಹಾರಾಷ್ಟ್ರದಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕದ ಪ್ರಮುಖ ಜಲಾಶಯಗಳಿಗೆ ನೀರಿನ ಹರಿವು ಹೆಚ್ಚಾಗಿದೆ.

ವಿಜಯಪುರ ಜಿಲ್ಲೆಯ ಆಲಮಟ್ಟಿ ಜಲಾಶಯಕ್ಕೂ ಭಾರಿ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದ್ದು, ರೈತರು ಹಾಗೂ ಜನರಲ್ಲಿ ಸಂತಸ ಮೂಡಿದೆ.

ಮಹಾರಾಷ್ಟ್ರದಲ್ಲಿ ಮಳೆ ಆರಂಭವಾಗುವ ಮೊದಲು ಆಲಮಟ್ಟಿಯ ಲಾಲಬಹದ್ದೂರ್ ಶಾಸ್ತ್ರಿ ಜಲಾಶಯದಲ್ಲಿ ಕೇವಲ 2 ಟಿಎಂಸಿ ಅಡಿ ನೀರು ಸಂಗ್ರಹವಾಗಿತ್ತು. ಇದೀಗ ಮಳೆ ಹೆಚ್ಚಾದ ಪರಿಣಾಮ ಜಲಾಶಯಕ್ಕೆ ನೀರಿನ ಒಳಹರಿವು ಗಣನೀಯವಾಗಿ ಏರಿಕೆಯಾಗಿದೆ.

123.081 ಟಿಎಂಸಿ ಅಡಿ ಗರಿಷ್ಠ ಸಾಮರ್ಥ್ಯದ ಆಲಮಟ್ಟಿ ಜಲಾಶಯದಲ್ಲಿ ಸದ್ಯ 25.536 ಟಿಎಂಸಿ ಅಡಿ ನೀರು ಸಂಗ್ರಹವಾಗಿದೆ. ಜಲಾಶಯಕ್ಕೆ ಪ್ರಸ್ತುತ 80,445 ಕ್ಯೂಸೆಕ್‌ ಒಳಹರಿವು ದಾಖಲಾಗಿದೆ.

ಕಳೆದ ಕೆಲ ದಿನಗಳಿಂದ ನೀರಿನ ಕೊರತೆಯಿಂದ ಆತಂಕದಲ್ಲಿದ್ದ ಜನರು, ಇದೀಗ ಜಲಾಶಯಕ್ಕೆ ನೀರು ಹರಿದು ಬರುತ್ತಿರುವುದರಿಂದ ನೆಮ್ಮದಿಯ ನಿಟ್ಟುಸಿರು ಬಿಡುತ್ತಿದ್ದಾರೆ. ಉತ್ತಮ ಮಳೆ ಮುಂದುವರಿದರೆ ಜಲಾಶಯದ ನೀರಿನ ಮಟ್ಟ ಮತ್ತಷ್ಟು ಏರಿಕೆಯಾಗುವ ನಿರೀಕ್ಷೆ ಇದೆ.

ಕಲ್ಲಯ್ಯಜ್ಜನವರಿಗೆ ರಾಷ್ಟ್ರೀಯ ಜ್ಞಾನಗಂಗಾ ಗೌರವ

ವಿಜಯಸಾಕ್ಷಿ ಸುದ್ದಿ, ಅಣ್ಣಿಗೇರಿ: ಅಡ್ನೂರ–ರಾಜೂರ–ಗದಗ ಬೃಹನ್ಮಠದ ಲಿಂಗೈಕ್ಯ ಪಂಚಾಕ್ಷರ ಶಿವಾಚಾರ್ಯ ಸ್ವಾಮೀಜಿಗಳ ಸ್ಮರಣಾರ್ಥ ಅಣ್ಣಿಗೇರಿಯ ಜ್ಞಾನಗಂಗಾ ಚಾರಿಟೇಬಲ್ ಟ್ರಸ್ಟ್ ಸ್ಥಾಪಿಸಿರುವ ಪ್ರಥಮ ರಾಷ್ಟ್ರೀಯ ಜ್ಞಾನಗಂಗಾ ಪುರಸ್ಕಾರ–2026 ಅನ್ನು ಗದಗದ ವೀರೇಶ್ವರ ಪುಣ್ಯಾಶ್ರಮದ ಪೂಜ್ಯ ಡಾ. ಕಲ್ಲಯ್ಯಜ್ಜನವರಿಗೆ ಪ್ರದಾನ ಮಾಡಲಾಯಿತು.

ವೀರೇಶ್ವರ ಪುಣ್ಯಾಶ್ರಮದ ಜಾತ್ರಾ ಮಹೋತ್ಸವದ ಅಂಗವಾಗಿ ನಡೆದ ಸಮಾರಂಭದಲ್ಲಿ ಧಾರವಾಡ ಮುರುಘಾಮಠದ ಮಲ್ಲಿಕಾರ್ಜುನ ಸ್ವಾಮೀಜಿ, ಬಳಗಾನೂರು ಹಾಗೂ ಚಿಕ್ಕೇನಕೊಪ್ಪ ಶರಣಾದಿ ಪೂಜ್ಯರು ಕಲ್ಲಯ್ಯಜ್ಜನವರಿಗೆ ಪ್ರಶಸ್ತಿ ಪ್ರದಾನ ಮಾಡಿ ಅಭಿನಂದಿಸಿದರು.

ಸಾಹಿತ್ಯ, ಕಲೆ, ಸಂಸ್ಕೃತಿ ಹಾಗೂ ಸಮಾಜಸೇವೆ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದವರನ್ನು ಗೌರವಿಸುವ ಉದ್ದೇಶದಿಂದ ಈ ಪ್ರಶಸ್ತಿಯನ್ನು ಸ್ಥಾಪಿಸಲಾಗಿದೆ. ಸಮಾಜಸೇವೆ ಮತ್ತು ಕಲಾ ಕ್ಷೇತ್ರಕ್ಕೆ ನೀಡಿರುವ ಅಮೂಲ್ಯ ಕೊಡುಗೆಯನ್ನು ಪರಿಗಣಿಸಿ ಕಲ್ಲಯ್ಯಜ್ಜನವರನ್ನು ಪ್ರಥಮ ಪುರಸ್ಕಾರಕ್ಕೆ ಆಯ್ಕೆ ಮಾಡಲಾಗಿದೆ.

ಟ್ರಸ್ಟ್‌ನ ಕಾರ್ಯದರ್ಶಿ ಎಂ.ಎನ್. ಯಲಬುರ್ಗಿ ಬಿನ್ನವತ್ತಳೆ ವಾಚಿಸಿ, ಪ್ರಸ್ತುತ ಪ್ರಶಸ್ತಿಯನ್ನು ₹5 ಸಾವಿರ ನಗದು ಸಹಿತ ಸಾಂಕೇತಿಕವಾಗಿ ಪ್ರದಾನಿಸಲಾಗಿದ್ದು ಮುಂದಿನ ವರ್ಷಗಳಲ್ಲಿ ಪ್ರಶಸ್ತಿಯ ಮೊತ್ತವನ್ನು ಹಂತ ಹಂತವಾಗಿ ₹10 ಲಕ್ಷದವರೆಗೆ ಹೆಚ್ಚಿಸುವ ಉದ್ದೇಶ ಟ್ರಸ್ಟ್ ಹೊಂದಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಟ್ರಸ್ಟ್‌ನ ಗೌರವಾಧ್ಯಕ್ಷ ಎಂ. ಕಲ್ಲಿನಾಥ ಶಾಸ್ತ್ರಿ, ಖಜಾಂಚಿ ಅರುಣ ಕರಿಶಂಕರಿ, ಉಪಾಧ್ಯಕ್ಷ ಚಂದ್ರಶೇಖರ ಸುರಕೋಡ, ನಿರ್ದೇಶಕರಾದ ವೀರೇಶ ಕಿತ್ತೂರ, ವೀರೇಶ ಶಾನುಭೋಗರ, ಬಿ.ಎಂ. ಕಲ್ಲನಗೌಡರ, ಕಿರಣ ಬೂದಿಹಾಳ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಸರ್ವಧರ್ಮ ಸಾಧು-ಸಂತರಿಗೆ ಒಂದೇ ವೇದಿಕೆ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ: ಧಾರ್ಮಿಕ ಸಾಮರಸ್ಯ, ಸಾಮಾಜಿಕ ಜಾಗೃತಿ ಮತ್ತು ಮಾನವೀಯ ಮೌಲ್ಯಗಳನ್ನು ಬಲಪಡಿಸುವ ಉದ್ದೇಶದಿಂದ ಸರ್ವಧರ್ಮ ಸಾಧು, ಸಂತ, ಶರಣರ ರಾಜ್ಯ ಒಕ್ಕೂಟವನ್ನು ಅಬ್ಬಿಗೇರಿಯಲ್ಲಿ ಅಧಿಕೃತವಾಗಿ ರಚಿಸಿ, ನೂತನ ಪದಾಧಿಕಾರಿಗಳನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

ಸಮೀಪದ ಅಬ್ಬಿಗೇರಿಯ ಸದ್ಗುರು ಯಲ್ಲಾಲಿಂಗೇಶ್ವರ ಮಠದಲ್ಲಿ ಭಾನುವಾರ ವಿವಿಧ ಧರ್ಮಗಳ ಪೂಜ್ಯರ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ರಾಜ್ಯಮಟ್ಟದ ಸಂಘಟನೆಯ ಅಗತ್ಯತೆ ಕುರಿತು ಸುದೀರ್ಘ ಚರ್ಚೆ ನಡೆಸಿ, ಧಾರ್ಮಿಕ ಸಾಮರಸ್ಯ, ಆಧ್ಯಾತ್ಮಿಕ ಮೌಲ್ಯಗಳ ಪ್ರಸಾರ ಹಾಗೂ ಸಮಾಜದಲ್ಲಿ ಶಾಂತಿ-ಸಹಬಾಳ್ವೆ ವಾತಾವರಣ ನಿರ್ಮಾಣಕ್ಕೆ ಒಕ್ಕೂಟವನ್ನು ಸ್ಥಾಪಿಸುವ ನಿರ್ಧಾರ ಕೈಗೊಳ್ಳಲಾಯಿತು.

ಒಕ್ಕೂಟದ ಗೌರವಾಧ್ಯಕ್ಷರಾಗಿ ಮುಗುಳಖೊಡ ಜಿಡಗಾಮಠದ ಡಾ. ಷಡಕ್ಷರಿ ಮುರುಘರಾಜೇಂದ್ರ ಮಹಾಸ್ವಾಮಿಗಳು, ರಾಜ್ಯಾಧ್ಯಕ್ಷರಾಗಿ ಅಬ್ಬಿಗೇರಿಯ ಸದ್ಗುರು ಯಲ್ಲಾಲಿಂಗೇಶ್ವರ ಮಠದ ಬಸವರಾಜ ಶರಣರು ಹಾಗೂ ರಾಜ್ಯ ಉಪಾಧ್ಯಕ್ಷರಾಗಿ ಕೊಪ್ಪಳ ಜಿಲ್ಲೆಯ ಇಟಗಿಯ ಮರುಳಸಿದ್ದೇಶ್ವರ ಪುಣ್ಯಾಶ್ರಮದ ಶಿವಶರಣ ಗದಿಗೆಪ್ಪಜ್ಜನವರು ಸರ್ವಾನುಮತದಿಂದ ಆಯ್ಕೆಯಾದರು.

ಸಭೆಯಲ್ಲಿ ಮಾತನಾಡಿದ ಧಾರ್ಮಿಕ ಮುಖಂಡರು, ಧರ್ಮಗಳ ನಡುವೆ ಪರಸ್ಪರ ಗೌರವ, ಸಹೋದರತ್ವ ಮತ್ತು ಮಾನವೀಯ ಮೌಲ್ಯಗಳನ್ನು ಬೆಳೆಸುವ ಅಗತ್ಯ ಇಂದು ಹೆಚ್ಚಾಗಿದ್ದು, ಈ ಒಕ್ಕೂಟವು ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಮತ್ತು ಮೌಲ್ಯಾಧಾರಿತ ಬದುಕಿನ ಸಂದೇಶವನ್ನು ರಾಜ್ಯಾದ್ಯಂತ ಸಾರಲಿದೆ ಎಂದು ಅಭಿಪ್ರಾಯಪಟ್ಟರು.

ರಾಜ್ಯಾದ್ಯಂತ ಧಾರ್ಮಿಕ ಸಾಮರಸ್ಯ, ನೈತಿಕ ಶಿಕ್ಷಣ, ಯುವಜನರಲ್ಲಿ ಮೌಲ್ಯಾಧಾರಿತ ಬದುಕಿನ ಅರಿವು, ಸಮಾಜಮುಖಿ ಸೇವಾ ಚಟುವಟಿಕೆಗಳು ಹಾಗೂ ಜನಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಸಂಕಲ್ಪವನ್ನು ಸಭೆಯಲ್ಲಿ ವ್ಯಕ್ತಪಡಿಸಲಾಯಿತು.

ಸಭೆಯಲ್ಲಿ ಕೇಶವಾನಂದ ಮಹಾಸ್ವಾಮಿಗಳು, ಮರುಳಸಿದ್ದೇಶ್ವರ ಮಹಾಸ್ವಾಮಿಗಳು, ಮಳಿಯಯ್ಯ ಸ್ವಾಮಿಗಳು, ಮರುಳಸಿದ್ದಯ್ಯ ಸ್ವಾಮಿಗಳು, ಋಷಿಕುಮಾರ ಸ್ವಾಮಿಗಳು, ನಾಗರಾಜ ಸ್ವಾಮಿಗಳು, ಹುಚ್ಚಯ್ಯ ಸ್ವಾಮಿಗಳು, ಆನಂದಯ್ಯ ಸ್ವಾಮಿಗಳು, ಚಂದ್ರಶೇಖರಯ್ಯ ಹಿರೇಮಠ ಶ್ರೀಗಳು, ಶಿವಮುನಿ ಸ್ವಾಮೀಜಿ ಸೇರಿದಂತೆ ವಿವಿಧ ಮಠಗಳ ಪೂಜ್ಯರು, ಧಾರ್ಮಿಕ ಮುಖಂಡರು, ಭಕ್ತರು ಹಾಗೂ ಗಣ್ಯರು ಭಾಗವಹಿಸಿದ್ದರು.

ಏನಿದು ಒಕ್ಕೂಟದ ಧ್ಯೇಯ?

“ಧರ್ಮಗಳ ನಡುವೆ ಸಾಮರಸ್ಯ ಬೆಳೆಸಿ, ಸಮಾಜದಲ್ಲಿ ಶಾಂತಿ, ನೈತಿಕತೆ ಹಾಗೂ ಮಾನವೀಯ ಮೌಲ್ಯಗಳನ್ನು ಬಲಪಡಿಸುವುದೇ ಸರ್ವಧರ್ಮ ಸಾಧು, ಸಂತ, ಶರಣರ ರಾಜ್ಯ ಒಕ್ಕೂಟದ ಮುಖ್ಯ ಉದ್ದೇಶ.”

ಬಿಎಲ್‌ಒ ಕಾರ್ಯದ ಒತ್ತಡ ಕಡಿಮೆ ಮಾಡಿ: ಶಿಕ್ಷಕರಿಗೆ ಸಹಕಾರ ನೀಡುವಂತೆ ಮನವಿ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಬಿಎಲ್‌ಒ (ಬೂತ್ ಮಟ್ಟದ ಅಧಿಕಾರಿ) ಕಾರ್ಯ ನಿರ್ವಹಿಸುತ್ತಿರುವ ಶಿಕ್ಷಕರ ಮೇಲೆ ಅನಗತ್ಯ ಒತ್ತಡ ಹೇರದೆ, ಅಗತ್ಯ ಸಹಕಾರ ನೀಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ನೌಕರರ ಸಂಘ ಹಾಗೂ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಲಕ್ಷ್ಮೇಶ್ವರ ಘಟಕದ ಪದಾಧಿಕಾರಿಗಳು ಸೋಮವಾರ ತಹಸೀಲ್ದಾರ್ ಧನಂಜಯ ಎಂ. ಅವರಿಗೆ ಮನವಿ ಸಲ್ಲಿಸಿದರು.

ಸಂಘದ ಅಧ್ಯಕ್ಷರಾದ ಗುರುರಾಜ ಹವಳದ, ಮಹದೇವಪ್ಪ ಭರಮಗೌಡರ ಹಾಗೂ ಕಾರ್ಯದರ್ಶಿಗಳಾದ ಎಂ.ಎ. ನದಾಫ್ ಮತ್ತು ಶ್ರೀಕಾಂತ ನಂದೆಣ್ಣವರ ಮಾತನಾಡಿ, ಚುನಾವಣೆ ಸೇರಿದಂತೆ ಕಂದಾಯ ಇಲಾಖೆಯ ವಿವಿಧ ಜವಾಬ್ದಾರಿಗಳನ್ನು ಶಿಕ್ಷಕರು ಪ್ರಾಮಾಣಿಕವಾಗಿ ನಿರ್ವಹಿಸುತ್ತಿದ್ದಾರೆ. ಪ್ರಸ್ತುತ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯ ಜುಲೈ 29ರವರೆಗೆ ನಡೆಯುತ್ತಿದ್ದು, ಇದರ ಜೊತೆಗೆ ಶೈಕ್ಷಣಿಕ ಚಟುವಟಿಕೆಗಳ ಜವಾಬ್ದಾರಿಯೂ ಹೆಚ್ಚಾಗಿದೆ ಎಂದು ತಿಳಿಸಿದರು.

ಶಾಲೆಗಳು ಆರಂಭವಾಗಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಬೋಧನೆಗೆ ಹೆಚ್ಚಿನ ಸಮಯ ಮೀಸಲಿಡಬೇಕಿದೆ. ಆದರೆ ವಿವಿಧ ಇಲಾಖೆಗಳ ಹೆಚ್ಚುವರಿ ಕರ್ತವ್ಯಗಳಿಂದ ಬೋಧನಾ ಕಾರ್ಯಕ್ಕೆ ಅಡಚಣೆಯಾಗುತ್ತಿದೆ. ಈಗಾಗಲೇ ಲಕ್ಷ್ಮೇಶ್ವರ ತಾಲೂಕಿನಲ್ಲಿ ಶಿಕ್ಷಕರ ಕೊರತೆ ಇರುವುದರಿಂದ ಮಕ್ಕಳ ಶಿಕ್ಷಣದ ಗುಣಮಟ್ಟದ ಮೇಲೂ ಪರಿಣಾಮ ಬೀರುತ್ತಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದರು.

ಹೀಗಾಗಿ ಬಿಎಲ್‌ಒ ಕಾರ್ಯ ನಿರ್ವಹಿಸುತ್ತಿರುವ ಶಿಕ್ಷಕರಿಗೆ ಅನಗತ್ಯ ಒತ್ತಡ ಹೇರದೆ ಅಗತ್ಯ ಸಹಕಾರ ನೀಡುವಂತೆ ತಹಶೀಲ್ದಾರ್‌ಗೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಸಂಘದ ಖಜಾಂಚಿ ಎಂ.ಡಿ. ವಾರದ, ರಾಜ್ಯ ಪರಿಷತ್ ಸದಸ್ಯ ಎ.ಬಿ. ಗೌಡರ, ನಿರ್ದೇಶಕರಾದ ಬಸವರಾಜ ಯರಗುಪ್ಪಿ, ಹನೀಫ್ ಶಿರಹಟ್ಟಿ, ಪ್ರಶಾಂತ ಸನದಿ, ಜಿಲ್ಲಾ ನಾಮನಿರ್ದೇಶಿತ ಸದಸ್ಯರಾದ ಎಂ.ಎಸ್. ಹಿರೇಮಠ ಹಾಗೂ ಎಂ.ಎಸ್. ಚಾಕಲಬ್ಬಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

“ಚುನಾವಣೆ ಸೇರಿದಂತೆ ಎಲ್ಲ ಸರ್ಕಾರಿ ಜವಾಬ್ದಾರಿಗಳನ್ನು ಶಿಕ್ಷಕರು ಪ್ರಾಮಾಣಿಕವಾಗಿ ನಿರ್ವಹಿಸುತ್ತಿದ್ದಾರೆ. ಶಿಕ್ಷಣಕ್ಕೂ ಧಕ್ಕೆಯಾಗದಂತೆ ಬಿಎಲ್‌ಒ ಕಾರ್ಯದಲ್ಲಿ ಸಹಕಾರ ನೀಡಬೇಕು.”

— ಕರ್ನಾಟಕ ರಾಜ್ಯ ನೌಕರರ ಸಂಘ ಹಾಗೂ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ

ಶಿಗ್ಲಿಯಲ್ಲಿ ರಸಗೊಬ್ಬರ ವಿತರಣೆಗೆ ಚಾಲನೆ ನೀಡಿದ ಶಾಸಕ ಡಾ. ಚಂದ್ರು ಲಮಾಣಿ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ತಾಲೂಕಿನ ಶಿಗ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ವತಿಯಿಂದ ರೈತರಿಗೆ ರಸಗೊಬ್ಬರ ವಿತರಣಾ ಕಾರ್ಯಕ್ಕೆ ಶಾಸಕ ಡಾ. ಚಂದ್ರು ಲಮಾಣಿ ಭಾನುವಾರ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು, ಶಿಗ್ಲಿ ಭಾಗದಲ್ಲಿ ಹೆಚ್ಚಿನ ಸಂಖ್ಯೆಯ ರೈತರು ಕೃಷಿಯನ್ನು ಅವಲಂಬಿಸಿದ್ದು, ಅವರಿಗೆ ಸಕಾಲದಲ್ಲಿ ರಸಗೊಬ್ಬರ ದೊರೆಯುವ ಉದ್ದೇಶದಿಂದ ವಿತರಣಾ ವ್ಯವಸ್ಥೆ ಆರಂಭಿಸಲಾಗಿದೆ. ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕರೆ ನೀಡಿದರು.

ಸಹಕಾರ ಸಂಘಗಳು ರೈತರ ಹಿತಾಸಕ್ತಿಯನ್ನು ಕೇಂದ್ರಬಿಂದುವಾಗಿಟ್ಟುಕೊಂಡು ಕಾರ್ಯನಿರ್ವಹಿಸಬೇಕು. ರೈತರಿಗೆ ಅಗತ್ಯ ಸೌಲಭ್ಯಗಳನ್ನು ಸಮಯಕ್ಕೆ ಒದಗಿಸುವುದೇ ಸಂಘದ ಮುಖ್ಯ ಧ್ಯೇಯವಾಗಬೇಕು ಎಂದು ಹೇಳಿದರು.

ಸಂಘದ ಅಧ್ಯಕ್ಷ ಯಲ್ಲಪ್ಪ ತಳವಾರ ಮಾತನಾಡಿ, ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಆಡಳಿತ ಮಂಡಳಿಯು ರಸಗೊಬ್ಬರ ವಿತರಣೆಗೆ ನಿರ್ಧರಿಸಿದ್ದು, ಎಫ್‌ಐಡಿ (FID) ವ್ಯವಸ್ಥೆಯ ಮೂಲಕ ಗೊಬ್ಬರ ವಿತರಿಸಲಾಗುವುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ನಾಗಪ್ಪ ತೋಟದ, ರಾಮಣ್ಣ ಲಮಾಣಿ, ಡಿ.ವೈ. ಹುನಗುಂದ, ಶಿವಣ್ಣ ಕುರಿ, ಅಶೋಕ ಶಿರಹಟ್ಟಿ, ಬಸಣ್ಣ ರ್ಜಗಿ, ಸಿದ್ದ ಪೂಜಾರ, ಬಸವರಾಜ ತೋಟದ, ಶಿವಾನಂದ ಅಡರಕಟ್ಟಿ, ದಾನಪ್ಪನವರ, ಸಂಜೀವ ದೇಸಾಯಿ, ಸುರೇಶ ಗೋದಿ, ಶಿವು ವಾರದ ಸೇರಿದಂತೆ ಹಲವರು ಉಪಸ್ಥಿತರಿದ್ದರು.

“ರೈತರಿಗೆ ಸಕಾಲದಲ್ಲಿ ರಸಗೊಬ್ಬರ ದೊರೆಯುವುದು ಅತ್ಯಗತ್ಯ. ರೈತರ ಹಿತ ಕಾಯುವುದೇ ಸಹಕಾರ ಸಂಘಗಳ ಮೊದಲ ಆದ್ಯತೆಯಾಗಬೇಕು.”

ಡಾ. ಚಂದ್ರು ಲಮಾಣಿ, ಶಾಸಕ

₹7 ಕೋಟಿ ರಸ್ತೆ ಕಾಮಗಾರಿ ಅರ್ಧಕ್ಕೆ ಸ್ಥಗಿತ: ಮೂರು ವರ್ಷಗಳಿಂದ ನರಕಯಾತನೆ ಅನುಭವಿಸುತ್ತಿರುವ ಗ್ರಾಮಸ್ಥರು

ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ/ಗದಗ: ಅಭಿವೃದ್ಧಿಯ ಹೆಸರಿನಲ್ಲಿ ಕೋಟಿ ಕೋಟಿ ರೂಪಾಯಿ ಅನುದಾನ ಬಿಡುಗಡೆಯಾದರೂ, ಜನರಿಗೆ ಅದರ ಪ್ರಯೋಜನ ಸಿಗದ ಮತ್ತೊಂದು ಪ್ರಕರಣ ಗದಗ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಶಿರಹಟ್ಟಿ ತಾಲೂಕಿನ ಕೊಕ್ಕರಗುಂದಿ–ಬಾಳೆಹೊಸೂರು ಸಂಪರ್ಕ ರಸ್ತೆ ಅಭಿವೃದ್ಧಿಗೆ ಸುಮಾರು ₹7 ಕೋಟಿ ಅನುದಾನ ಬಿಡುಗಡೆಯಾಗಿದ್ದರೂ, ಕಾಮಗಾರಿ ಆರಂಭಿಸಿ ಮೂರು ವರ್ಷಗಳಾದರೂ ಪೂರ್ಣಗೊಂಡಿಲ್ಲ. ಗುತ್ತಿಗೆದಾರರು ಜಲ್ಲಿಕಲ್ಲು ಹಾಕಿ ಕಾಮಗಾರಿಯನ್ನು ಅರ್ಧಕ್ಕೆ ಬಿಟ್ಟು ನಾಪತ್ತೆಯಾಗಿದ್ದು, ನಿತ್ಯ ಸಾವಿರಾರು ಜನರು, ರೈತರು ಹಾಗೂ ವಿದ್ಯಾರ್ಥಿಗಳು ಜೀವ ಕೈಯಲ್ಲಿ ಹಿಡಿದು ಸಂಚರಿಸುವ ಪರಿಸ್ಥಿತಿ ನಿರ್ಮಾಣವಾಗಿದೆ.

ಈ ರಸ್ತೆ ಕೊಕ್ಕರಗುಂದಿ ಗ್ರಾಮವನ್ನು ಬಾಳೆಹೊಸೂರಿಗೆ ಸಂಪರ್ಕಿಸುವ ಪ್ರಮುಖ ಮಾರ್ಗವಾಗಿದೆ. ಗ್ರಾಮಸ್ಥರು ಬ್ಯಾಂಕ್, ಸರ್ಕಾರಿ ಕಚೇರಿ, ಆಸ್ಪತ್ರೆ, ಶಾಲೆ-ಕಾಲೇಜು, ಕೃಷಿ ಮಾರುಕಟ್ಟೆ ಸೇರಿದಂತೆ ಬಹುತೇಕ ದೈನಂದಿನ ಅಗತ್ಯಗಳಿಗಾಗಿ ಬಾಳೆಹೊಸೂರನ್ನೇ ಅವಲಂಬಿಸಿದ್ದಾರೆ. ಆದರೆ ಅಪೂರ್ಣ ಕಾಮಗಾರಿಯಿಂದ ರಸ್ತೆ ಸಂಪೂರ್ಣ ಹಾಳಾಗಿದ್ದು, ವಾಹನ ಸವಾರರು ಪ್ರತಿದಿನ ಸಂಕಷ್ಟ ಅನುಭವಿಸುತ್ತಿದ್ದಾರೆ.

ಗ್ರಾಮಸ್ಥರ ಮಾಹಿತಿ ಪ್ರಕಾರ, ಹಿಂದಿನ ಶಾಸಕ ರಾಮಣ್ಣ ಲಮಾಣಿ ಅವರ ಅವಧಿಯಲ್ಲಿ ಗ್ರಾಮಸ್ಥರ ನಿರಂತರ ಹೋರಾಟದ ಫಲವಾಗಿ ಪಂಚಾಯತ್ ರಾಜ್ ಇಲಾಖೆಯಿಂದ ಸುಮಾರು ₹7 ಕೋಟಿ ಅನುದಾನ ಬಿಡುಗಡೆಯಾಗಿತ್ತು. ಗುತ್ತಿಗೆದಾರರು ಸುಮಾರು ಐದು ಕಿಲೋಮೀಟರ್‌ವರೆಗೆ ಜಲ್ಲಿಕಲ್ಲು ಹಾಕಿದ ಬಳಿಕ ಕಾಮಗಾರಿ ಸ್ಥಗಿತಗೊಳಿಸಿದ್ದು, ಕಳೆದ ಮೂರು ವರ್ಷಗಳಿಂದ ಯಾವುದೇ ಕೆಲಸ ನಡೆದಿಲ್ಲ. ರಸ್ತೆ ಬದಿಯಲ್ಲಿ ಗಿಡಗಂಟಿಗಳು ಬೆಳೆದಿದ್ದು, ಮಳೆ ಬಂದರೆ ಕೆಸರು, ಬಿಸಿಲಾದರೆ ಧೂಳಿನ ಕಾಟದಿಂದ ಜನರ ಸಂಚಾರ ದುಸ್ತರವಾಗಿದೆ.

ರಸ್ತೆಯ ದುಸ್ಥಿತಿಯಿಂದ ರೈತರು ಕೃಷಿ ಉತ್ಪನ್ನಗಳನ್ನು ಸಾಗಿಸಲು ಪರದಾಡುತ್ತಿದ್ದಾರೆ. ಆಂಬುಲೆನ್ಸ್ ಸೇರಿದಂತೆ ತುರ್ತು ಸೇವೆಗಳ ವಾಹನಗಳಿಗೂ ಈ ರಸ್ತೆಯಲ್ಲಿ ಸಂಚರಿಸುವುದು ಕಷ್ಟವಾಗಿದೆ. ಶಾಲಾ ಮಕ್ಕಳು ಹಾಗೂ ದ್ವಿಚಕ್ರ ವಾಹನ ಸವಾರರು ಅಪಘಾತದ ಭೀತಿಯಲ್ಲೇ ಓಡಾಡಬೇಕಾದ ಸ್ಥಿತಿ ನಿರ್ಮಾಣವಾಗಿದೆ.

ಗ್ರಾಮಸ್ಥರು ಈಗಿನ ಶಾಸಕ ಡಾ. ಚಂದ್ರು ಲಮಾಣಿ ಅವರ ಗಮನಕ್ಕೂ ಸಮಸ್ಯೆ ತಂದಿದ್ದರೂ ಯಾವುದೇ ಸ್ಪಂದನೆ ದೊರೆತಿಲ್ಲ ಎಂದು ಆರೋಪಿಸಿದ್ದಾರೆ. ಅಧಿಕಾರಿಗಳ ನಿರ್ಲಕ್ಷ್ಯ ಹಾಗೂ ಗುತ್ತಿಗೆದಾರರ ಬೇಜವಾಬ್ದಾರಿಯಿಂದ ಅಭಿವೃದ್ಧಿ ಕಾಮಗಾರಿ ಅಪೂರ್ಣವಾಗಿದ್ದು, ಸಾರ್ವಜನಿಕ ಹಣ ವ್ಯರ್ಥವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ರಸ್ತೆ ಕಾಮಗಾರಿ ವಿಳಂಬದ ಕುರಿತು ಸಮಗ್ರ ತನಿಖೆ ನಡೆಸಿ, ಗುತ್ತಿಗೆದಾರರ ವಿರುದ್ಧ ಕ್ರಮ ಕೈಗೊಂಡು ಕಾಮಗಾರಿ ಶೀಘ್ರ ಪೂರ್ಣಗೊಳಿಸಬೇಕು. ಇಲ್ಲವಾದರೆ ಉಗ್ರ ಹೋರಾಟ ಆರಂಭಿಸುವುದಾಗಿ ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ.

ಈಗಾಗಲೇ ಕೋಟ್ಯಂತರ ರೂಪಾಯಿ ವೆಚ್ಚವಾಗಿದ್ದರೂ ರಸ್ತೆ ಜನರ ಬಳಕೆಗೆ ಬರದಿರುವುದು ಆಡಳಿತದ ಕಾರ್ಯವೈಖರಿಯ ಮೇಲೆಯೇ ಪ್ರಶ್ನೆ ಎಬ್ಬಿಸಿದೆ. ಗ್ರಾಮಸ್ಥರ ಆಕ್ರೋಶಕ್ಕೆ ಜಿಲ್ಲಾಡಳಿತ ಯಾವ ರೀತಿಯಲ್ಲಿ ಸ್ಪಂದಿಸುತ್ತದೆ ಎಂಬುದು ಕಾದು ನೋಡಬೇಕಾಗಿದೆ.

“ರಸ್ತೆ ಕಾಮಗಾರಿ ಪೂರ್ಣಗೊಳಿಸುವಂತೆ ಶಾಸಕ ಡಾ. ಚಂದ್ರು ಲಮಾಣಿ, ಪಂಚಾಯತ್ ರಾಜ್ ಇಲಾಖೆ ಹಾಗೂ ಜಿಲ್ಲಾಧಿಕಾರಿಗೆ ಹಲವು ಬಾರಿ ಮನವಿ ಸಲ್ಲಿಸಿದ್ದೇವೆ. ಆದರೆ ಯಾರೂ ಸ್ಪಂದಿಸುತ್ತಿಲ್ಲ. ಗುತ್ತಿಗೆದಾರನ ವಿರುದ್ಧ ಕ್ರಮ ಜರುಗಿಸಿ, ಕಾಮಗಾರಿ ತಕ್ಷಣ ಪೂರ್ಣಗೊಳಿಸಬೇಕು. ಈ ಕಾಮಗಾರಿಯಲ್ಲಿ ಭ್ರಷ್ಟಾಚಾರ ನಡೆದಿದೆಯೇ ಎಂಬುದನ್ನು ಸರ್ಕಾರ ತನಿಖೆ ನಡೆಸಬೇಕು.”

ಫಕೀರೇಶ, ವಸಂತಗೌಡ ಪಾಟೀಲ ಹಾಗೂ ಗ್ರಾಮಸ್ಥರು

ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ–ಯುಕೆಜಿ ಆರಂಭಕ್ಕೆ ಚಾಲನೆ

ವಿಜಯಸಾಕ್ಷಿ ಸುದ್ದಿ, ಮುಳಗುಂದ: ಸರ್ಕಾರಿ ಶಾಲೆಗಳು ಗುಣಮಟ್ಟದ ಶಿಕ್ಷಣದೊಂದಿಗೆ ವಿದ್ಯಾರ್ಥಿಗಳಿಗೆ ಅಗತ್ಯವಿರುವ ಎಲ್ಲ ಮೂಲಸೌಕರ್ಯ ಹಾಗೂ ಸೌಲಭ್ಯಗಳನ್ನು ಒದಗಿಸುತ್ತಿದ್ದು, ಪಾಲಕರು ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ದಾಖಲಿಸಬೇಕು ಎಂದು ಗದಗ ಜಿಲ್ಲಾ ಡಿಡಿಪಿಐ ಆರ್.ಎಸ್. ಬುರಡಿ ಹೇಳಿದರು.

ಪಟ್ಟಣದ ಸರ್ಕಾರಿ ಮಾದರಿ ಹೆಣ್ಣು ಮಕ್ಕಳ ಪ್ರಾಥಮಿಕ ಶಾಲೆಯಲ್ಲಿ ಎಲ್‌ಕೆಜಿ ಹಾಗೂ ಯುಕೆಜಿ ತರಗತಿಗಳ ಪ್ರಾರಂಭೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಮುಳಗುಂದದ ಸರ್ಕಾರಿ ಶಾಲೆಗಳು ದಾಖಲಾತಿ ಹೆಚ್ಚಿಸುವಲ್ಲಿ ಪರಸ್ಪರ ಪೈಪೋಟಿಯಿಂದ ಉತ್ತಮ ಸಾಧನೆ ಮಾಡುತ್ತಿವೆ. ಇಂತಹ ಶಾಲೆಗಳಿಗೆ ಅಗತ್ಯ ಮೂಲಸೌಕರ್ಯ ಕಲ್ಪಿಸಲು ಇಲಾಖೆ ಸದಾ ಸಿದ್ಧವಿದ್ದು, ಅತಿಥಿ ಶಿಕ್ಷಕರನ್ನೂ ಶೀಘ್ರವೇ ನೇಮಕ ಮಾಡಲಾಗುವುದು ಎಂದರು.

ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಪೌಷ್ಟಿಕ ಆಹಾರ, ಉಚಿತ ಪಠ್ಯಪುಸ್ತಕ, ಸಮವಸ್ತ್ರ, ಶೂ-ಸಾಕ್ಸ್ ಸೇರಿದಂತೆ ಸರ್ಕಾರದ ವಿವಿಧ ಸೌಲಭ್ಯಗಳು ದೊರೆಯುತ್ತಿವೆ. ಈ ಅವಕಾಶವನ್ನು ಸದ್ಬಳಕೆ ಮಾಡಿಕೊಂಡು ಪಾಲಕರು ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ದಾಖಲಿಸಬೇಕು ಎಂದು ಮನವಿ ಮಾಡಿದರು.

ಎಂ.ಎಚ್. ಕಂಬಳಿ ಮಾತನಾಡಿ, ಸರ್ಕಾರಿ ಶಾಲೆಗಳಲ್ಲಿ ಕನ್ನಡದ ಜೊತೆಗೆ ಇಂಗ್ಲಿಷ್ ಮಾಧ್ಯಮ ಶಿಕ್ಷಣವೂ ಲಭ್ಯವಿದ್ದು, ಅನುಭವಿ ಶಿಕ್ಷಕರಿಂದ ಗುಣಮಟ್ಟದ ಬೋಧನೆ ನಡೆಯುತ್ತಿದೆ. ಪಾಲಕರು ಸರ್ಕಾರಿ ಶಾಲೆಗಳ ಬಗ್ಗೆ ವಿಶ್ವಾಸ ಹೊಂದಬೇಕು ಎಂದರು.

ಎಸ್‌ಡಿಎಂಸಿ ಅಧ್ಯಕ್ಷರು ಮಾತನಾಡಿ, ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಆಡಳಿತ ಮಂಡಳಿ ಶ್ರಮಿಸುತ್ತಿದ್ದು, ಶಿಕ್ಷಣ ಇಲಾಖೆ ಹಾಗೂ ಸಾರ್ವಜನಿಕರ ಸಹಕಾರದಿಂದ ಇನ್ನಷ್ಟು ಉತ್ತಮವಾಗಿ ಬೆಳೆಸಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ವಿ.ಡಿ. ಕಣವಿ, ಮಹಾಂತೇಶ ಕಣವಿ, ಮುಖ್ಯ ಶಿಕ್ಷಕಿ ಗುಂಜಳ, ಶೋಭಾ ಪಾಟೀಲ, ಕಾಂತಪ್ಪ ಕಾಗಿ, ಚಂದ್ರು ಭಜಂತ್ರಿ, ಬಿ.ಎಲ್. ಜಾಧವ, ಮಹೇಶ ನೀಲಗುಂದ ಸೇರಿದಂತೆ ಶಿಕ್ಷಕರು, ಪಾಲಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಗದಗ-ಬೆಟಗೇರಿ ಲಯನ್ಸ್ ಕ್ಲಬ್‌ಗೆ ನೂತನ ಪದಾಧಿಕಾರಿಗಳ ಆಯ್ಕೆ

ವಿಜಯಸಾಕ್ಷಿ ಸುದ್ದಿ, ಗದಗ: ಗದಗ-ಬೆಟಗೇರಿ ಲಯನ್ಸ್ ಕ್ಲಬ್‌ನ 2026-27ನೇ ಸಾಲಿನ ನೂತನ ಅಧ್ಯಕ್ಷರಾಗಿ ಪ್ರವೀಣ ವಾರಕರ ಹಾಗೂ ಕಾರ್ಯದರ್ಶಿಯಾಗಿ ಲಿಂಗರಾಜ ತೋಟದ ಆಯ್ಕೆಯಾಗಿದ್ದಾರೆ.

ಉಪಾಧ್ಯಕ್ಷರಾಗಿ ಡಾ. ನವೀನ ಹಿರೇಗೌಡರ ಮತ್ತು ರಾಜಣ್ಣ ಮಲ್ಲಾಡದ, ಸಹ ಕಾರ್ಯದರ್ಶಿಯಾಗಿ ರೇಣುಕಪ್ರಸಾದ ಹಿರೇಮಠ, ಖಜಾಂಚಿಯಾಗಿ ರೇಣುಕಪ್ರಸಾದ ಶಿಗ್ಲಿಮಠ ಆಯ್ಕೆಯಾಗಿದ್ದಾರೆ.

ಲಯನ್ಸ್ ಕ್ಲಬ್‌ನ ಮಹಿಳಾ ಘಟಕದ ಅಧ್ಯಕ್ಷೆಯಾಗಿ ಅಮೃತಾ ವಾರಕರ, ಕಾರ್ಯದರ್ಶಿಯಾಗಿ ಅಪರ್ಣಾ ತೋಟದ ಹಾಗೂ ಖಜಾಂಚಿಯಾಗಿ ಪ್ರಿಯಾ ಶಿಗ್ಲಿಮಠ ಆಯ್ಕೆಯಾಗಿದ್ದಾರೆ.

ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಜುಲೈ 9ರಂದು ಗುರುವಾರ ಸಂಜೆ 7 ಗಂಟೆಗೆ ಮುಂಡರಗಿ ರಸ್ತೆಯ ಲಯನ್ಸ್ ಶಾಲೆಯ ಸಭಾಂಗಣದಲ್ಲಿ ನಡೆಯಲಿದೆ. ಲಯನ್ಸ್ ಕ್ಲಬ್‌ನ ದ್ವಿತೀಯ ಉಪ ಜಿಲ್ಲಾ ಗವರ್ನರ್ ಗವಿಸಿದ್ದಪ್ಪ ಮುದ್ಗಲ್ ಪದಗ್ರಹಣ ನೆರವೇರಿಸಲಿದ್ದು, ನಿಕಟಪೂರ್ವ ಜಿಲ್ಲಾ ಗವರ್ನರ್ ಅನಂತ ಪೋತ್ನೀಸ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.