ಮಂಡ್ಯ: ಗಣೇಶೋತ್ಸವ ಸ್ವಾಗತ ಕಾರ್ಯಕ್ರಮದ ವೇಳೆ ಕಾಂಗ್ರೆಸ್ ಶಾಸಕ ಗಣಿಗ ಪಿ.ರವಿಕುಮಾರ್ ಅವರ ತಲೆಗೆ ಕಬ್ಬಿಣದ ಪೈಪ್ ಬಿದ್ದು ಗಂಭೀರ ಗಾಯವಾಗಿರುವ ಘಟನೆ ಮಂಡ್ಯ ನಗರದ ಮರಿಗೌಡ ಬಡಾವಣೆಯಲ್ಲಿ ನಡೆದಿದೆ.
ಗಾಯಗೊಂಡ ಶಾಸಕ ಗಣಿಗ ರವಿಕುಮಾರ್ ಅವರನ್ನು ತಕ್ಷಣವೇ ಮಂಡ್ಯದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ತುರ್ತು ಚಿಕಿತ್ಸಾ ಘಟಕದಲ್ಲಿ ವೈದ್ಯರು ಪ್ರಾಥಮಿಕ ಚಿಕಿತ್ಸೆ ನೀಡಿದ್ದು, ಬಳಿಕ ಹೆಚ್ಚಿನ ಪರಿಶೀಲನೆಗಾಗಿ ಸಿಟಿ ಸ್ಕ್ಯಾನ್ ನಡೆಸಲಾಗುತ್ತಿದೆ.
ಘಟನೆ ವಿಷಯ ತಿಳಿಯುತ್ತಿದ್ದಂತೆ ಮಂಡ್ಯ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿ ಆಸ್ಪತ್ರೆಗೆ ದೌಡಾಯಿಸಿ, ಶಾಸಕರ ಆರೋಗ್ಯದ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ.
ಇನ್ನು ತಮ್ಮ ನೆಚ್ಚಿನ ನಾಯಕನಿಗೆ ಗಾಯವಾಗಿರುವ ಸುದ್ದಿ ತಿಳಿಯುತ್ತಿದ್ದಂತೆ ಶಾಸಕರನ್ನು ನೋಡಲು ಸಾರ್ವಜನಿಕರು, ಮತದಾರರು, ವಿವಿಧ ಪಕ್ಷಗಳ ನಾಯಕರು ಹಾಗೂ ಮುಖಂಡರು ಆಸ್ಪತ್ರೆಗೆ ಆಗಮಿಸುತ್ತಿದ್ದಾರೆ. ಇದರಿಂದ ಆಸ್ಪತ್ರೆ ಆವರಣದಲ್ಲಿ ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.
ಅಷ್ಟಕ್ಕೂ ಈ ಘಟನೆ ನಡೆದಿದ್ದು ಹೇಗೆ ಎಂಬ ಪ್ರಶ್ನೆ ಮೂಡಿದೆ. ಗಣೇಶೋತ್ಸವ ಸ್ವಾಗತದ ವೇಳೆ ಶಾಸಕರ ತಲೆಯ ಮೇಲೆ ಕಬ್ಬಿಣದ ಪೈಪ್ ಬಿದ್ದಿದೆ ಎನ್ನಲಾಗಿದ್ದು, ಕಾರ್ಯಕ್ರಮದ ಆಯೋಜನೆ ಹಾಗೂ ನಿರ್ವಹಣೆಯಲ್ಲಿ ನಿರ್ಲಕ್ಷ್ಯವಾಗಿದೆಯೇ ಎಂಬ ಪ್ರಶ್ನೆಯೂ ಎದುರಾಗಿದೆ.
ಘಟನೆಗೆ ಸಂಬಂಧಿಸಿದಂತೆ ಕಾರ್ಯಕ್ರಮ ಆಯೋಜಕರು ಹಾಗೂ ನಿರ್ವಹಣೆಯ ಹೊಣೆ ಹೊತ್ತಿದ್ದ ಏಜೆನ್ಸಿಯ ನಿರ್ಲಕ್ಷ್ಯದ ಬಗ್ಗೆ ಪರಿಶೀಲನೆ ನಡೆಯಬೇಕಿದೆ.
ಇನ್ನು ಶಾಸಕ ಗಣಿಗ ರವಿಕುಮಾರ್ ಈ ಹಿಂದೆ ಕೆರಗೋಡು ಹನುಮಧ್ವಜ ವಿವಾದದ ಸಂದರ್ಭದಲ್ಲೂ ಸುದ್ದಿಯಾಗಿದ್ದರು. ಬಿಜೆಪಿ ಹಾಗೂ ಜೆಡಿಎಸ್ ನಾಯಕರ ವಿರುದ್ಧ ನಿರಂತರವಾಗಿ ವಾಗ್ದಾಳಿ ನಡೆಸುತ್ತಿದ್ದ ಶಾಸಕರಿಗೆ ಇದೀಗ ಗಣೇಶೋತ್ಸವ ಕಾರ್ಯಕ್ರಮದ ವೇಳೆ ಗಾಯವಾಗಿರುವುದು ರಾಜಕೀಯ ವಲಯದಲ್ಲೂ ಚರ್ಚೆಗೆ ಕಾರಣವಾಗಿದೆ.
ಸದ್ಯ ಶಾಸಕ ಗಣಿಗ ರವಿಕುಮಾರ್ ಅವರಿಗೆ ವೈದ್ಯರು ಚಿಕಿತ್ಸೆ ನೀಡುತ್ತಿದ್ದು, ಅವರ ಆರೋಗ್ಯ ಸ್ಥಿತಿಯ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

