ಹಾಸನ: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ-2026 ಪ್ರಕ್ರಿಯೆಗೆ ಹಾಸನದಲ್ಲಿ ಅಧಿಕೃತವಾಗಿ ಚಾಲನೆ ದೊರೆತಿದೆ.
ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರು ಮನೆಯಿಂದಲೇ ಈ ಪ್ರಕ್ರಿಯೆಗೆ ಆರಂಭ ನೀಡಲಾಗಿದ್ದು, ಅಧಿಕಾರಿಗಳು ಮನೆಮನೆಗೆ ತೆರಳಿ ಫಾರ್ಮ್ ಭರ್ತಿ ಕಾರ್ಯವನ್ನು ಆರಂಭಿಸಿದ್ದಾರೆ.
ಈ ಸಂದರ್ಭದಲ್ಲಿ ಮಾತನಾಡಿದ ಬಾನು ಮುಷ್ತಾಕ್, ಆರಂಭದಲ್ಲಿ ಈ ಪ್ರಕ್ರಿಯೆಯ ಬಗ್ಗೆ ತನಗೂ ಭಯ ಮತ್ತು ಗೊಂದಲವಿತ್ತು. ಆದರೆ ಪ್ರಕ್ರಿಯೆಯಲ್ಲಿ ಭಾಗವಹಿಸಿದ ಬಳಿಕ ಅದು ಬಹಳ ಸರಳ ಹಾಗೂ ಸುಲಭವಾಗಿರುವುದು ತಿಳಿದು ಭಯ ನಿವಾರಣೆಯಾಗಿದೆ ಎಂದು ಅವರು ಹೇಳಿದ್ದಾರೆ.
ರಾಜಕೀಯ ಕಾರ್ಯಕರ್ತರು ಹಾಗೂ ಕೆಲವು ಪ್ರಮುಖರು ಈ ಪ್ರಕ್ರಿಯೆಯನ್ನು ಕಠಿಣವೆಂದು ಹೇಳಿರುವುದರಿಂದ ಸಾರ್ವಜನಿಕರಲ್ಲಿ ಅನಗತ್ಯ ಭಯ ಸೃಷ್ಟಿಯಾಗಿತ್ತು. ಅಧಿಕಾರಿಗಳೊಂದಿಗೆ ಎನ್ಯೂಮರೇಷನ್ ಫಾರ್ಮ್ ಭರ್ತಿ ಮಾಡಿದಾಗ, ಕೇವಲ ಆಧಾರ್ ಕಾರ್ಡ್ ಮತ್ತು ಹಳೆಯ ಮತದಾರರ ಗುರುತಿನ ಚೀಟಿ ಮಾತ್ರ ಬೇಕಾಗಿತ್ತು ಎಂದು ಅವರು ತಿಳಿಸಿದ್ದಾರೆ. ಈ ಪ್ರಕ್ರಿಯೆ ತುಂಬಾ ಸರಳವಾಗಿದ್ದು, ನಾಗರಿಕರು ಯಾವುದೇ ಗಾಬರಿಗೊಳ್ಳಬೇಕಾದ ಅಗತ್ಯವಿಲ್ಲ ಎಂದು ಬಾನು ಮುಷ್ತಾಕ್ ಸ್ಪಷ್ಟಪಡಿಸಿದ್ದಾರೆ.
ಅಧಿಕಾರಿಗಳು ಜನರಿಗೆ ತಾಳ್ಮೆಯಿಂದ ಸಹಕರಿಸಬೇಕು ಎಂದು ಅವರು ಮನವಿ ಮಾಡಿದ್ದು, ಯಾವುದೇ ಸಮಸ್ಯೆ ಎದುರಾದರೆ ಸಂಬಂಧಿತ ಜಿಲ್ಲಾಧಿಕಾರಿಗಳನ್ನು ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.

