Home Blog

ದೆಹಲಿಯಲ್ಲಿ ಭಾರೀ ಮಳೆ; 15 ವಿಮಾನಗಳ ಮಾರ್ಗ ಏಕಾಏಕಿ ಬದಲಾವಣೆ!

ನವದೆಹಲಿ: ರಾಜಧಾನಿ ದೆಹಲಿಯಲ್ಲಿ ಭಾನುವಾರ ಸುರಿದ ಭಾರೀ ಮಳೆ ಹಾಗೂ ಹವಾಮಾನ ವೈಪರೀತ್ಯದಿಂದ ವಿಮಾನ ಸಂಚಾರದಲ್ಲಿ ಅಡಚಣೆ ಉಂಟಾಗಿದೆ.

ಈ ಹಿನ್ನೆಲೆಯಲ್ಲಿ ಒಟ್ಟು 15 ವಿಮಾನಗಳ ಮಾರ್ಗವನ್ನು ಬದಲಾಯಿಸಲಾಗಿದ್ದು, ಅವುಗಳನ್ನು ಜೈಪುರ ಹಾಗೂ ಲಕ್ನೋ ವಿಮಾನ ನಿಲ್ದಾಣಗಳಿಗೆ ತಿರುಗಿಸಲಾಗಿದೆ.

ಮಾಹಿತಿಯ ಪ್ರಕಾರ, 10 ದೇಶೀಯ ಹಾಗೂ 5 ಅಂತರರಾಷ್ಟ್ರೀಯ ವಿಮಾನಗಳ ಮಾರ್ಗ ಬದಲಾವಣೆ ಮಾಡಲಾಗಿದ್ದು, ದೆಹಲಿ ವಿಮಾನ ನಿಲ್ದಾಣದಲ್ಲಿ ಕೆಲಕಾಲ ಕಾರ್ಯಾಚರಣೆ ವ್ಯತ್ಯಯಗೊಂಡಿತು. ಭಾರೀ ಮಳೆಯ ನಡುವೆಯೂ ವಿಮಾನ ಸಂಚಾರವನ್ನು ಹಂತ ಹಂತವಾಗಿ ಪುನರಾರಂಭಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದೆಹಲಿಯಲ್ಲಿ ಮಧ್ಯಾಹ್ನದವರೆಗೆ ತಾಪಮಾನ 28 ಡಿಗ್ರಿ ಸೆಲ್ಸಿಯಸ್‌ಗೆ ಇಳಿಕೆಯಾಗಿದ್ದು, ದಿನವಿಡೀ ಗುಡುಗು ಸಹಿತ ಮಳೆ ಮುಂದುವರಿದಿದೆ. ಕಳೆದ 24 ಗಂಟೆಗಳಲ್ಲಿ ನಗರದ ವಿವಿಧ ಭಾಗಗಳಲ್ಲಿ ಸಾಧಾರಣದಿಂದ ಭಾರೀ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಇದೇ ವೇಳೆ, ಮುಂದಿನ ಎರಡು ದಿನಗಳಲ್ಲಿ ದೆಹಲಿಯ ತಾಪಮಾನ ಇನ್ನೂ 2 ರಿಂದ 3 ಡಿಗ್ರಿ ಸೆಲ್ಸಿಯಸ್ ಇಳಿಯುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.

ಉತ್ತರ ಭಾರತದಲ್ಲೂ ಮುಂಗಾರು ಚುರುಕಾಗಿದ್ದು, ಹರಿಯಾಣ, ಪಂಜಾಬ್ ಹಾಗೂ ರಾಜಸ್ಥಾನದ ಕಡೆಗೆ ಮಳೆ ಮುಂದುವರಿಯುವ ಸಾಧ್ಯತೆ ಇದೆ. ಹಿಮಾಚಲ ಪ್ರದೇಶದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಮಂಡಿ, ಸಿರ್ಮೌರ್, ಚಂಬಾ ಹಾಗೂ ಕಾಂಗ್ರಾ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಬೈಕ್‌ಗೆ ಸೈಡ್ ಕೊಡುವಾಗ ‌ಅವಘಡ! ಕಾಫಿ ತೋಟಕ್ಕೆ ಕಾರು ಉರುಳಿ ಐವರಿಗೆ ಗಾಯ

ಚಿಕ್ಕಮಗಳೂರು: ಬೈಕ್‌ಗೆ ಸೈಡ್ ಕೊಡುವ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಕಾಫಿ ತೋಟಕ್ಕೆ ನುಗ್ಗಿ ಪಲ್ಟಿಯಾದ ಘಟನೆ ಕಳಸ ತಾಲೂಕಿನ ಬೈನೇಕಾಡು ಹೋಮ್‌ಸ್ಟೇ ಬಳಿ ನಡೆದಿದೆ.

ವ್ಯಾಗನರ್ ಕಾರು ಹೊರನಾಡಿನಿಂದ ಉಡುಪಿ ಕಡೆಗೆ ತೆರಳುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ಎದುರಿನಿಂದ ಬಂದ ಬೈಕ್‌ಗೆ ಸೈಡ್ ಕೊಡಲು ಯತ್ನಿಸಿದಾಗ, ನಿರಂತರ ಮಳೆಯಿಂದ ನೆನೆದಿದ್ದ ರಸ್ತೆ ಬದಿಗೆ ಕಾರು ಇಳಿದಿದ್ದು, ಆ ಕ್ಷಣದಲ್ಲಿ ಸ್ಕಿಡ್ ಆಗಿ ಕಾಫಿ ತೋಟಕ್ಕೆ ನುಗ್ಗಿ ಪಲ್ಟಿಯಾಗಿದೆ.

ಅಪಘಾತದಲ್ಲಿ ಕಾರಿನಲ್ಲಿದ್ದ ಐವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅದೃಷ್ಟವಶಾತ್ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಸ್ಥಳೀಯರು ತಕ್ಷಣವೇ ಧಾವಿಸಿ ಗಾಯಾಳುಗಳನ್ನು ರಕ್ಷಣೆ ಮಾಡಿದ್ದಾರೆ.

ಘಟನೆ ಸಂಬಂಧ ಕಳಸ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

ಮಳೆಯಿಂದ ರಸ್ತೆ ಬದಿಗಳು ಜಾರುವ ಸ್ಥಿತಿಯಲ್ಲಿ ಇರುವುದರಿಂದ ವಾಹನ ಚಾಲಕರು ವಿಶೇಷ ಎಚ್ಚರಿಕೆ ವಹಿಸಬೇಕು ಎಂದು ಪೊಲೀಸರು ಪ್ರವಾಸಿಗರು ಹಾಗೂ ಸ್ಥಳೀಯರಿಗೆ ಮನವಿ ಮಾಡಿದ್ದಾರೆ.

ಮದುವೆಯಾದ 2 ತಿಂಗಳಲ್ಲೇ ನವವಿವಾಹಿತೆ ಅನುಮಾನಾಸ್ಪದ ಸಾವು: ಕೊಲೆ ಶಂಕೆ!

ನವದೆಹಲಿ: ದೆಹಲಿಯ ಲೋಧಿ ಕಾಲೋನಿಯಲ್ಲಿ ಮದುವೆಯಾಗಿ ಕೇವಲ ಎರಡು ತಿಂಗಳಲ್ಲೇ ನವವಿವಾಹಿತೆಯೊಬ್ಬಳು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ನಡೆದಿದೆ.

28 ವರ್ಷದ ಆಕೃತಿ ಎಂಬ ಯುವತಿಯ ಮೃತದೇಹ ಪಾಲಿಕಾ ಕುಂಜ್‌ನ ಎನ್‌ಡಿಎಂಸಿ ಫ್ಲಾಟ್‌ಗಳ ಕಟ್ಟಡದ ಹೊರಭಾಗದಲ್ಲಿ ಪತ್ತೆಯಾಗಿದೆ.

ಮಾಹಿತಿಯ ಪ್ರಕಾರ, ಆಕೃತಿ ಎಷ್ಟನೇ ಮಹಡಿಯಿಂದ ಬಿದ್ದಿದ್ದಾಳೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಆಕೆಯನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದರೂ, ಆಸ್ಪತ್ರೆಯಲ್ಲಿ ವೈದ್ಯರು ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ.

ಆಕೃತಿ ಏಪ್ರಿಲ್ 24 ರಂದು ವಿವಾಹವಾಗಿದ್ದಳು ಎಂದು ತಿಳಿದುಬಂದಿದೆ. ಛತ್ತರ್‌ಪುರದ ಖಾಸಗಿ ಕಂಪನಿಯೊಂದರಲ್ಲಿ ಸೇಲ್ಸ್ ಎಕ್ಸಿಕ್ಯೂಟಿವ್ ಆಗಿ ಕೆಲಸ ಮಾಡುತ್ತಿದ್ದ ಆಕೆ, ಮದುವೆಯ ನಂತರ ಪತಿ ಹಾಗೂ ಅತ್ತೆ-ಮಾವರಿಂದ ವರದಕ್ಷಿಣೆ ಕಿರುಕುಳ ಹಾಗೂ ದೈಹಿಕ ಹಿಂಸೆ ಅನುಭವಿಸುತ್ತಿದ್ದಳು ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಇದು ಆತ್ಮಹತ್ಯೆಯಲ್ಲ, ಕೊಲೆ ಎಂದು ಆಕೃತಿ ಕುಟುಂಬದವರು ಗಂಭೀರ ಆರೋಪ ಮಾಡಿದ್ದು, ಆಕೆಯ ಸಹೋದರ ಮಾತನಾಡಿ “ಆಕೃತಿ ಮಾನಸಿಕವಾಗಿ ಧೈರ್ಯವಂತಳು, ಆತ್ಮಹತ್ಯೆ ಮಾಡಿಕೊಳ್ಳುವ ಸ್ವಭಾವವಿಲ್ಲ. ಇದು ಪೂರ್ವನಿಯೋಜಿತ ಕೊಲೆ” ಎಂದು ಹೇಳಿದ್ದಾರೆ.

ಈ ಪ್ರಕರಣವನ್ನು ಭಾರತ್ ನ್ಯಾಯ ಸಂಹಿತೆಯ ಸೆಕ್ಷನ್ 196 ಅಡಿಯಲ್ಲಿ ದಾಖಲಿಸಿಕೊಂಡು ಪೊಲೀಸರು ತನಿಖೆ ಆರಂಭಿಸಿದ್ದಾರೆ. ಎಲ್ಲಾ ಆಯಾಮಗಳಲ್ಲಿ ಪ್ರಕರಣದ ವಿಚಾರಣೆ ಮುಂದುವರಿದಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ಭೀಕರ ಘಟನೆ: ವೈರ್‌ನಿಂದ ಕುತ್ತಿಗೆ ಬಿಗಿದು ಪತ್ನಿ ಕೊಲೆ, ಗಂಡ ಎಸ್ಕೇಪ್!

ಚಿಕ್ಕಬಳ್ಳಾಪುರ: ಕೌಟುಂಬಿಕ ಕಲಹದ ಹಿನ್ನೆಲೆ ಪತಿಯೇ ಪತ್ನಿಯನ್ನು ವೈರ್‌ನಿಂದ ಕುತ್ತಿಗೆ ಬಿಗಿದು ಕೊಲೆ ಮಾಡಿರುವ ಭೀಕರ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಮಂಚೇನಹಳ್ಳಿ ತಾಲೂಕಿನ ಗಿಡಗಾನಹಳ್ಳಿ ಗ್ರಾಮದಲ್ಲಿ ನಡೆದಿದೆ.

35 ವರ್ಷದ ಪವಿತ್ರಾ ಮೃತಪಟ್ಟ ಮಹಿಳೆ ಎಂದು ಗುರುತಿಸಲಾಗಿದೆ. ಆರೋಪಿ ಪತಿ ವೆಂಕಟೇಶ್ ಕೊಲೆ ಮಾಡಿದ ಬಳಿಕ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಾಹಿತಿಯ ಪ್ರಕಾರ, ದಂಪತಿಗೆ ಮದುವೆಯಾಗಿ 15 ವರ್ಷಗಳಾಗಿದ್ದು, ಮೂವರು ಮಕ್ಕಳಿದ್ದಾರೆ. ಆರೋಪಿ ವೆಂಕಟೇಶ್‌ಗೆ ಕುಡಿತದ ಚಟವಿದ್ದು, ಸಾಲದ ಭಾರ ಹೆಚ್ಚಾಗಿತ್ತು. ಇದೇ ಕಾರಣಕ್ಕೆ ದಂಪತಿ ನಡುವೆ ಆಗಾಗ ಜಗಳ ನಡೆಯುತ್ತಿತ್ತು ಎಂದು ಹೇಳಲಾಗಿದೆ.

ಮನೆ ಒತ್ತೆ ಇಡುವ ವಿಚಾರ ಸೇರಿದಂತೆ ಆರ್ಥಿಕ ಸಮಸ್ಯೆಗಳ ಹಿನ್ನೆಲೆ ಇಂದು ನಡೆದ ಗಲಾಟೆ ತೀವ್ರಗೊಂಡು ಕೊಲೆಯಲ್ಲಿ ಅಂತ್ಯವಾಗಿದೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.

ಘಟನೆ ಕುರಿತು ಮಾಹಿತಿ ದೊರೆತ ತಕ್ಷಣ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಲ್ ಚೌಕ್ಸೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಂಚೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪರಾರಿಯಾಗಿರುವ ಆರೋಪಿ ವೆಂಕಟೇಶ್‌ಗಾಗಿ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ.

ಅಂಬಾರಿ ಆನೆ ಅಭಿಮನ್ಯುವಿನ ದಂತ ಭಗ್ನ; ಹುಲಿ ಕಾರ್ಯಾಚರಣೆ ವೇಳೆ ಅವಘಡ!

ಮಡಿಕೇರಿ: ವಿಶ್ವವಿಖ್ಯಾತ ಮೈಸೂರು ದಸರಾ ಅಂಬಾರಿ ಆನೆ ಕ್ಯಾಪ್ಟನ್ ಅಭಿಮನ್ಯುವಿನ ದಂತ ಭಗ್ನಗೊಂಡಿರುವ ಘಟನೆ ನಡೆದಿದೆ.

ಸರಗೂರು ಭಾಗದಲ್ಲಿ ಹುಲಿ ಸೆರೆ ಹಿಡಿಯುವ ಕಾರ್ಯಾಚರಣೆಯಲ್ಲಿ ತೊಡಗಿದ್ದ ವೇಳೆ ಕ್ಯಾಂಪ್‌ನಲ್ಲಿ ಮರದ ದಿಮ್ಮಿ ಸಾಗಿಸುವ ಸಂದರ್ಭದಲ್ಲಿ ಅಭಿಮನ್ಯುವಿನ ಎಡಭಾಗದ ದಂತ ಕಠಿಣ ವಸ್ತುವಿಗೆ ಬಡಿದಿದೆ. ಪರಿಣಾಮ ದಂತದ ತುದಿ ಮುರಿದಿದೆ ಎಂದು ಅರಣ್ಯ ಇಲಾಖೆ ಮೂಲಗಳು ತಿಳಿಸಿವೆ.

ಘಟನೆಯ ಬಳಿಕ ಸ್ಥಳದಲ್ಲೇ ಪಶುವೈದ್ಯರು ಅಭಿಮನ್ಯುವಿನ ದಂತವನ್ನು ಪರಿಶೀಲಿಸಿದ್ದು, ಯಾವುದೇ ಆತಂಕಪಡುವ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಸದ್ಯ ಮತ್ತಿಗೋಡು ಆನೆ ಶಿಬಿರದಲ್ಲಿರುವ ಅಭಿಮನ್ಯು ಆರೋಗ್ಯವಾಗಿದ್ದು, ಎಂದಿನಂತೆ ಕಾರ್ಯಾಚರಣೆಯಲ್ಲಿ ಭಾಗವಹಿಸುತ್ತಿರುವುದಾಗಿ ತಿಳಿದುಬಂದಿದೆ.

ಒಟ್ಟಿನಲ್ಲಿ ಅಂಬಾರಿ ಆನೆ ಅಭಿಮನ್ಯುವಿನ ದಂತದ ತುದಿ ಭಗ್ನಗೊಂಡಿದ್ದರೂ ಆರೋಗ್ಯದಲ್ಲಿ ಯಾವುದೇ ಸಮಸ್ಯೆ ಇಲ್ಲ ಎಂಬುದು ಅರಣ್ಯ ಇಲಾಖೆಯ ಸಮಾಧಾನಕರ ಮಾಹಿತಿ.

ಇದೇ ನಡುವೆ ಈ ವರ್ಷದ ದಸರಾ ಅಂಬಾರಿ ಹೊರುವ ಜವಾಬ್ದಾರಿ ಅಭಿಮನ್ಯುವಿಗೆ ಕೊನೆಯದಾಗುವ ಸಾಧ್ಯತೆ ಇದೆ ಎಂಬ ಚರ್ಚೆ ಆರಂಭವಾಗಿದೆ. ಮುಂದಿನ ವರ್ಷದಿಂದ ಅಂಬಾರಿ ಹೊರುವ ಜವಾಬ್ದಾರಿ ಮಹೇಂದ್ರ ಅಥವಾ ಧನಂಜಯ ಆನೆಗಳ ಹೆಗಲಿಗೆ ಬೀಳುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಹಿಂದೂಗಳ ಮೇಲಿನ ದಾಳಿಗೆ ರಾಜ್ಯ ಸರ್ಕಾರ ಹೊಣೆ: ಕಾಂಗ್ರೆಸ್ ವಿರುದ್ಧ ಬಿ.ವೈ. ವಿಜಯೇಂದ್ರ ವಾಗ್ದಾಳಿ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತೀವ್ರ ವಾಗ್ದಾಳಿ ನಡೆಸಿದ್ದು, ರಾಜ್ಯದಲ್ಲಿ ಹಿಂದೂಗಳ ಮೇಲಿನ ಹಲ್ಲೆ ಮತ್ತು ಹತ್ಯೆ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ಆರೋಪಿಸಿದ್ದಾರೆ. ಬಿಜೆಪಿ ರಾಜ್ಯ ಕಚೇರಿಯಲ್ಲಿ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸರ್ಕಾರ ಅಲ್ಪಸಂಖ್ಯಾತರ ಓಲೈಕೆ ರಾಜಕಾರಣದಲ್ಲಿ ತೊಡಗಿದೆ ಎಂದು ಟೀಕಿಸಿದರು.

ಪ್ರಧಾನಮಂತ್ರಿ ಹುದ್ದೆಗೆ ಗಾಂಧಿ ಕುಟುಂಬದವರೇ ಬರಬೇಕು ಎಂಬ ಮನೋಭಾವ ಕಾಂಗ್ರೆಸ್ ಪಕ್ಷಕ್ಕಿದೆ. ಆದರೆ ನರೇಂದ್ರ ಮೋದಿ ಮೂರನೇ ಬಾರಿಗೆ ಪ್ರಧಾನಿಯಾಗಿ ದೇಶವನ್ನು ಜಾಗತಿಕ ಮಟ್ಟದಲ್ಲಿ ಶಕ್ತಿಶಾಲಿ ರಾಷ್ಟ್ರವನ್ನಾಗಿ ರೂಪಿಸುತ್ತಿದ್ದಾರೆ ಎಂದು ವಿಜಯೇಂದ್ರ ಹೇಳಿದರು.

ಯಲ್ಲಾಪುರದಲ್ಲಿ ದಲಿತ ಸಮುದಾಯದ ಯುವತಿಯ ಹತ್ಯೆ ನಡೆದರೂ ಸರ್ಕಾರದ ಯಾವುದೇ ಸಚಿವರು ಸಂತ್ರಸ್ತ ಕುಟುಂಬವನ್ನು ಭೇಟಿ ಮಾಡಿಲ್ಲ. ಅದೇ ರೀತಿ ಕೊಪ್ಪಳದಲ್ಲಿ ಪರಿಶಿಷ್ಟ ಪಂಗಡದ ವ್ಯಕ್ತಿಯ ಹತ್ಯೆ ಪ್ರಕರಣದಲ್ಲೂ ಸರ್ಕಾರದ ಪ್ರತಿನಿಧಿಗಳು ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳುವ ಕೆಲಸ ಮಾಡಿಲ್ಲ ಎಂದು ಅವರು ಆರೋಪಿಸಿದರು.

ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ಕಾಂಗ್ರೆಸ್ ಸರ್ಕಾರ ಅಲ್ಪಸಂಖ್ಯಾತರ ಓಲೈಕೆ ಮಾಡುತ್ತಿದ್ದು, ಇದರಿಂದ ಸಮಾಜದಲ್ಲಿ ಅಸಮಾಧಾನ ಹೆಚ್ಚುತ್ತಿದೆ ಎಂದು ವಿಜಯೇಂದ್ರ ಟೀಕಿಸಿದರು. ಸಮಾಜದಲ್ಲಿ ಜಾಗೃತಿ ಮೂಡಿಸಿ ಎಲ್ಲ ವರ್ಗಗಳಿಗೂ ಸಾಮಾಜಿಕ ನ್ಯಾಯ ದೊರಕುವಂತೆ ಮಾಡಲು ಬಿಜೆಪಿ ಬದ್ಧವಾಗಿದೆ ಎಂದರು.

ಕಾಂಗ್ರೆಸ್ ತನ್ನ ರಾಜಕೀಯ ಲಾಭಕ್ಕಾಗಿ ಸಮಾಜದಲ್ಲಿ ವಿಷಬೀಜ ಬಿತ್ತುವ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದ ಅವರು, ಇತ್ತೀಚೆಗೆ ಹಾವೇರಿ ಜಿಲ್ಲೆಯ ನರೇಗಲ್‌ನಲ್ಲಿ ಹಾಲುಮತ ಸಮಾಜದ ಲೋಹಿತ್ ಕುರುಬ ಹಾಗೂ ಶಿವರಾಮ ಕುರುಬ ಅವರ ಮೇಲೆ ನಡೆದ ಹಲ್ಲೆ ಪ್ರಕರಣವನ್ನು ಉಲ್ಲೇಖಿಸಿದರು.

ಹೋರಿ ಬೆದರಿಸುವ ವೇಳೆ ಪಟಾಕಿ ಸಿಡಿಸಿದ ವಿಚಾರವನ್ನು ನೆಪವನ್ನಾಗಿ ಮಾಡಿಕೊಂಡು ಕೆಲವರು ಮನೆಗೆ ನುಗ್ಗಿ ಹಲ್ಲೆ ನಡೆಸಿದ್ದು, ಗಂಭೀರ ಗಾಯಗೊಳಿಸಿದ್ದಾರೆ ಎಂದು ಅವರು ಹೇಳಿದರು. ಇಂತಹ ಘಟನೆ ನಡೆದರೂ ಮುಖ್ಯಮಂತ್ರಿ ಅಥವಾ ಯಾವುದೇ ಸಚಿವರು ಸಂತ್ರಸ್ತ ಕುಟುಂಬವನ್ನು ಭೇಟಿ ಮಾಡಿ ಧೈರ್ಯ ತುಂಬಿಲ್ಲ ಎಂದು ವಿಜಯೇಂದ್ರ ಆಕ್ಷೇಪ ವ್ಯಕ್ತಪಡಿಸಿದರು.

ಇವಿ ಬಸ್ʼಗಳಿಂದ ಸರಣಿ ಅಪಘಾತ: ಹೊಸ ಎಲೆಕ್ಟ್ರಿಕ್ ಬಸ್ ಗಳ ಖರೀದಿ ಪ್ರಕ್ರಿಯೆಗೆ ತಾತ್ಕಾಲಿಕ ಬ್ರೇಕ್

ಬೆಂಗಳೂರು: ನಗರದಲ್ಲಿ ಇತ್ತೀಚೆಗೆ ಎಲೆಕ್ಟ್ರಿಕ್ (ಇವಿ) ಬಸ್‌ಗಳಿಗೆ ಸಂಬಂಧಿಸಿದ ಅಪಘಾತಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಹೊಸ ಇವಿ ಬಸ್‌ಗಳ ಖರೀದಿ ಕುರಿತು ರಾಜ್ಯ ಸರ್ಕಾರ ತಾತ್ಕಾಲಿಕವಾಗಿ ಎಚ್ಚರಿಕೆಯ ನಿಲುವು ತಾಳಿದೆ.

ಇವಿ ಬಸ್‌ಗಳ ಕಾರ್ಯಕ್ಷಮತೆ ಹಾಗೂ ಅಪಘಾತಗಳ ಕಾರಣಗಳ ಬಗ್ಗೆ ಸಮಗ್ರ ಅಧ್ಯಯನ ನಡೆಸಲು ಸಾರಿಗೆ ಇಲಾಖೆ ಮುಂದಾಗಿದ್ದು, ಸಾರಿಗೆ ಸಚಿವರ ಸೂಚನೆಯ ಮೇರೆಗೆ ಈ ಸಂಬಂಧ ಇಲಾಖೆಯ ಕಾರ್ಯದರ್ಶಿಗೆ ಅಗತ್ಯ ನಿರ್ದೇಶನ ನೀಡಲಾಗಿದೆ.

ಈ ಹಿಂದೆ ಸಾರಿಗೆ ಸಚಿವರಾಗಿದ್ದ ರಾಮಲಿಂಗಾ ರೆಡ್ಡಿ ಅವರು ಇವಿ ಬಸ್‌ಗಳಿಗೆ ಸಂಬಂಧಿಸಿದ ತಾಂತ್ರಿಕ ಸಮಸ್ಯೆಗಳು ಹಾಗೂ ಅಪಘಾತಗಳ ಬಗ್ಗೆ ದಾಖಲೆಗಳೊಂದಿಗೆ ಕೇಂದ್ರ ಸರ್ಕಾರದ ಗಮನ ಸೆಳೆದಿದ್ದರು. ಆದರೆ, ಈವರೆಗೆ ಯಾವುದೇ ಸ್ಪಷ್ಟ ಪರಿಹಾರ ಕಂಡುಬಂದಿಲ್ಲ ಎನ್ನಲಾಗಿದೆ.

ಇತ್ತೀಚಿನ ಅಪಘಾತಗಳ ಹಿನ್ನೆಲೆಯಲ್ಲಿ ಅಧ್ಯಯನ ವರದಿ ಸಲ್ಲಿಕೆಯಾದ ಬಳಿಕವೇ ಹೊಸ ಇವಿ ಬಸ್‌ಗಳ ಖರೀದಿ ಕುರಿತು ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮೂಲಗಳು ತಿಳಿಸಿವೆ.

ಈ ವರ್ಷ ರಾಜ್ಯದ ಸಾರ್ವಜನಿಕ ಸಾರಿಗೆ ವ್ಯವಸ್ಥೆಗೆ ಸುಮಾರು 1,500 ಹೊಸ ಇವಿ ಬಸ್‌ಗಳು ಸೇರ್ಪಡೆಯಾಗಬೇಕಾಗಿತ್ತು. ಆದರೆ ಸರ್ಕಾರ ವರದಿ ಕೇಳಿರುವ ಹಿನ್ನೆಲೆಯಲ್ಲಿ ಹೊಸ ಇವಿ ಬಸ್ ಖರೀದಿ ಪ್ರಕ್ರಿಯೆಗೆ ಸದ್ಯ ತಾತ್ಕಾಲಿಕ ಬ್ರೇಕ್ ಬಿದ್ದಿದೆ.

13 ವರ್ಷದ ಬಾಲಕಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣ: ರಾಜಸ್ಥಾನದಲ್ಲಿ ನಾಲ್ಕು ಹೋಟೆಲ್ʼ ಗಳ ನೆಲಸಮ

ಜೈಪುರ: 13 ವರ್ಷದ ಬಾಲಕಿಯ ಮೇಲೆ ನಿರಂತರವಾಗಿ ಸಾಮೂಹಿಕ ಅತ್ಯಾಚಾರ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಸ್ಥಾನದಲ್ಲಿ ನಾಲ್ಕು ಹೋಟೆಲ್‌ಗಳನ್ನು ಜಿಲ್ಲಾಡಳಿತ ಮತ್ತು ಪೊಲೀಸರು ನೆಲಸಮಗೊಳಿಸಿದ್ದಾರೆ.

ಪ್ರಕರಣದಲ್ಲಿ ಹೋಟೆಲ್ ಮಾಲೀಕರು ಹಾಗೂ ನಿರ್ವಾಹಕರ ವಿರುದ್ಧ ಗಂಭೀರ ಆರೋಪಗಳು ಕೇಳಿಬಂದಿರುವ ಹಿನ್ನೆಲೆಯಲ್ಲಿ, ಅಪರಾಧಕ್ಕೆ ಸಂಬಂಧಿಸಿದ ಕಟ್ಟಡಗಳನ್ನು ಬುಲ್ಡೋಜರ್ ಮೂಲಕ ತೆರವುಗೊಳಿಸಲಾಗಿದೆ. ಆರೋಪಿಗಳು ಕಠಿಣ ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಪೊಲೀಸ್ ವರಿಷ್ಠಾಧಿಕಾರಿ ಹರಿಶಂಕರ್ ಎಚ್ಚರಿಕೆ ನೀಡಿದ್ದಾರೆ.

ಜೂನ್ 18ರಂದು ಬಾಲಕಿ ಮನೆಯಿಂದ ನಾಪತ್ತೆಯಾಗಿದ್ದಳು. ತನಿಖೆ ಪ್ರಕಾರ, ರಿಕ್ಷಾ ಚಾಲಕನೊಬ್ಬ ಬಾಲಕಿಯನ್ನು ಹೋಟೆಲ್ ಮಾಲೀಕರಿಗೆ ಕರೆದೊಯ್ದಿದ್ದು, ನಂತರ ಐದು ದಿನಗಳ ಕಾಲ ನಗರದ ವಿವಿಧ ಹೋಟೆಲ್‌ಗಳಲ್ಲಿ 30ಕ್ಕೂ ಹೆಚ್ಚು ಪುರುಷರು ಆಕೆಯ ಮೇಲೆ ಪದೇ ಪದೇ ಅತ್ಯಾಚಾರ ಎಸಗಿದ್ದಾರೆ ಎನ್ನಲಾಗಿದೆ.

ಎಫ್‌ಐಆರ್ ಪ್ರಕಾರ, ಹಲವಾರು ಹೋಟೆಲ್ ಮಾಲೀಕರು ಮತ್ತು ನಿರ್ವಾಹಕರು ಕೂಡ ಈ ಕೃತ್ಯದಲ್ಲಿ ಭಾಗಿಯಾಗಿದ್ದು, ಬಾಲಕಿಗೆ ಮದ್ಯ ಕುಡಿಸಿ ದೌರ್ಜನ್ಯ ಎಸಗಲಾಗಿದೆ ಎಂದು ಆರೋಪಿಸಲಾಗಿದೆ.

ಪ್ರಕರಣ ಸಂಬಂಧ ಇದುವರೆಗೆ 12 ಆರೋಪಿಗಳನ್ನು ಬಂಧಿಸಲಾಗಿದ್ದು, ಉಳಿದ ಶಂಕಿತರ ಪತ್ತೆಗಾಗಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಈ ಅಮಾನವೀಯ ಘಟನೆ ರಾಜ್ಯಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದು, ಅಕ್ರಮ ಹೋಟೆಲ್‌ಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದರ ಜೊತೆಗೆ ತಪ್ಪಿತಸ್ಥರಿಗೆ ಗರಿಷ್ಠ ಶಿಕ್ಷೆ ವಿಧಿಸಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ. ಇದೇ ವಿಚಾರವಾಗಿ ಕಾಂಗ್ರೆಸ್ ಪಕ್ಷವೂ ಪ್ರತಿಭಟನೆ ನಡೆಸಿ, ಪ್ರಕರಣದಲ್ಲಿರುವ ಎಲ್ಲ ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಆಗ್ರಹಿಸಿದೆ.

ಟ್ರಾಫಿಕ್‌ ದಂಡದ 50% ರಿಯಾಯಿತಿ ಯೋಜನೆಗೆ ಭರ್ಜರಿ ಸ್ಪಂದನೆ; ಕೇವಲ 14 ದಿನಗಳಲ್ಲಿ ₹18 ಕೋಟಿಗೂ ಅಧಿಕ ದಂಡ ಸಂಗ್ರಹ

ಬೆಂಗಳೂರು: ರಾಜ್ಯ ಸರ್ಕಾರ ಜಾರಿಗೆ ತಂದಿರುವ ಸಂಚಾರ ನಿಯಮ ಉಲ್ಲಂಘನೆಯ ಬಾಕಿ ದಂಡದ ಮೇಲಿನ ಶೇ.50 ರಿಯಾಯಿತಿ ಯೋಜನೆಗೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ದೊರೆತಿದೆ. ಜೂನ್ 21ರಿಂದ ಜುಲೈ 4ರವರೆಗೆ ಕೇವಲ 14 ದಿನಗಳಲ್ಲಿ ₹18,15,42,200 ದಂಡದ ಮೊತ್ತ ಸಂಗ್ರಹವಾಗಿದೆ ಎಂದು ಬೆಂಗಳೂರು ಸಂಚಾರ ಪೊಲೀಸರು ತಿಳಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ಬೆಂಗಳೂರು ಸಂಚಾರ ಪೊಲೀಸರು, ಜೂನ್ 4ರಂದು ರಾಜ್ಯ ಸರ್ಕಾರವು ಪೊಲೀಸ್ ಇಲಾಖೆಯ ಇ-ಚಲನ್‌ನಲ್ಲಿ ಬಾಕಿ ಉಳಿದಿರುವ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳ ದಂಡ ಪಾವತಿಗೆ ಶೇ.50 ರಿಯಾಯಿತಿ ಘೋಷಿಸಿತ್ತು. ಈ ಆದೇಶ ಜೂನ್ 21ರಿಂದ ಜಾರಿಗೆ ಬಂದಿತ್ತು ಎಂದು ತಿಳಿಸಿದ್ದಾರೆ.

ರಿಯಾಯಿತಿ ಯೋಜನೆಯಡಿ ಜೂನ್ 21ರಿಂದ ಜುಲೈ 4ರವರೆಗೆ ವಿವಿಧ ಮಾಧ್ಯಮಗಳ ಮೂಲಕ 6,06,032 ಪ್ರಕರಣಗಳು ಇತ್ಯರ್ಥಗೊಂಡಿದ್ದು, ಒಟ್ಟು ₹18.15 ಕೋಟಿ ದಂಡ ವಸೂಲಿಯಾಗಿದೆ.

ವಾಹನ ಸವಾರರು ಈ ರಿಯಾಯಿತಿಯ ಪ್ರಯೋಜನ ಪಡೆಯಲು ಜುಲೈ 10ರವರೆಗೆ ಅವಕಾಶವಿದೆ. ಸಾರ್ವಜನಿಕರ ಅನುಕೂಲಕ್ಕಾಗಿ ನಗರದ ಪ್ರಮುಖ ಸಂಚಾರ ಜಂಕ್ಷನ್‌ಗಳಲ್ಲಿ ಪಿಎಸ್‌ಐ ಸೇರಿದಂತೆ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಶಾಶ್ವತ ವಿದ್ಯುತ್ ಸಂಪರ್ಕಕ್ಕೆ ಅರ್ಜಿ ಸಲ್ಲಿಸಲು ಆ.15ರವರೆಗೆ ಅವಕಾಶ; ಸರ್ಕಾರದಿಂದ ಅವಧಿ ವಿಸ್ತರಣೆ

ಬೆಂಗಳೂರು: ಶಾಶ್ವತ ವಿದ್ಯುತ್ ಸಂಪರ್ಕ ಪಡೆಯಲು ಅರ್ಜಿ ಸಲ್ಲಿಸುವ ಅವಧಿಯನ್ನು ಆಗಸ್ಟ್ 15ರವರೆಗೆ ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಈ ಮೊದಲು ಜೂನ್ 30ರಿಂದ 15 ದಿನಗಳೊಳಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿತ್ತು. ಸಚಿವ ಸಂಪುಟದಲ್ಲಿ ಕೈಗೊಂಡ ನಿರ್ಧಾರಕ್ಕೆ ತಿದ್ದುಪಡಿ ಮಾಡಿರುವ ಸರ್ಕಾರ, ಅರ್ಜಿ ಸಲ್ಲಿಕೆಗೆ ನೀಡಿದ್ದ ಗಡುವನ್ನು ಇದೀಗ ಆಗಸ್ಟ್ 15ರವರೆಗೆ ವಿಸ್ತರಿಸಿದೆ.

ಇದೇ ವೇಳೆ ಗ್ರಾಮೀಣ ಪ್ರದೇಶಗಳಲ್ಲಿರುವ ಕೋಳಿ ಸಾಕಾಣಿಕೆ ಕೇಂದ್ರಗಳು ಹಾಗೂ ಕೃಷಿ ಸಂಬಂಧಿತ ಚಟುವಟಿಕೆಗಳಿಗೆ ವಿದ್ಯುತ್ ಸಂಪರ್ಕ ಪಡೆಯಲು ಸ್ವಾಧೀನಾನುಭವ ಪ್ರಮಾಣ ಪತ್ರ ಸಲ್ಲಿಸುವ ಕಡ್ಡಾಯದಿಂದ ವಿನಾಯಿತಿ ನೀಡಲಾಗಿದೆ ಎಂದು ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ.

ಈ ನಿರ್ಧಾರದಿಂದ ಗ್ರಾಮೀಣ ಭಾಗದ ರೈತರು ಹಾಗೂ ಕೃಷಿ ಆಧಾರಿತ ಚಟುವಟಿಕೆಗಳಲ್ಲಿ ತೊಡಗಿರುವ ಫಲಾನುಭವಿಗಳಿಗೆ ಶಾಶ್ವತ ವಿದ್ಯುತ್ ಸಂಪರ್ಕ ಪಡೆಯುವ ಪ್ರಕ್ರಿಯೆ ಮತ್ತಷ್ಟು ಸುಲಭವಾಗಲಿದೆ.