Home Blog

ಸೊಮಾಲಿಯಾ ಕರಾವಳಿಯಲ್ಲಿ ಟರ್ಕಿಶ್ ಶಸ್ತ್ರಾಸ್ತ್ರ ಹೊತ್ತ ಕಾರ್ಗೋ ಶಿಪ್ ಹೈಜಾಕ್: 6 ಭಾರತೀಯರು ಸೇರಿ 10 ಮಂದಿ ಒತ್ತೆಯಾಳು

0

ನವದೆಹಲಿ: ಟರ್ಕಿಶ್ ಶಸ್ತ್ರಾಸ್ತ್ರಗಳು ಹಾಗೂ ಇತರ ಉಪಕರಣಗಳನ್ನು ಸಾಗಿಸುತ್ತಿದ್ದ ಕಾರ್ಗೋ ಹಡಗನ್ನು ಸೊಮಾಲಿಯಾ ಕರಾವಳಿಯಲ್ಲಿ ಕಡಲ್ಗಳ್ಳರು ಅಪಹರಿಸಿದ್ದಾರೆ. ಹಡಗಿನಲ್ಲಿದ್ದ ಆರು ಭಾರತೀಯರು ಸೇರಿದಂತೆ ಒಟ್ಟು 10 ಸಿಬ್ಬಂದಿ ಕಡಲ್ಗಳ್ಳರ ವಶದಲ್ಲಿದ್ದಾರೆ ಎಂದು ಸೊಮಾಲಿಯಾ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕ್ಯಾಮರೂನ್ ಧ್ವಜ ಹೊತ್ತ M/V LUTUF ಹಡಗನ್ನು ಸೋಮವಾರ ಸೊಮಾಲಿಯಾದ ಪಂಟ್ಲ್ಯಾಂಡ್‌ನ ಐಲ್ ಜಿಲ್ಲೆಯ ಮರ್ರಾಯದಿಂದ ಸುಮಾರು 3.5 ನಾಟಿಕಲ್ ಮೈಲುಗಳಷ್ಟು ದೂರದಲ್ಲಿ ಕಡಲ್ಗಳ್ಳರು ಹೈಜಾಕ್ ಮಾಡಿದ್ದಾರೆ ಎನ್ನಲಾಗಿದೆ.

ಅಪಹರಣಕ್ಕೊಳಗಾದ ಸಿಬ್ಬಂದಿಯಲ್ಲಿ ಆರು ಭಾರತೀಯರು, ಒಬ್ಬ ಟರ್ಕಿಶ್ ಪ್ರಜೆ, ಒಬ್ಬ ಜಾರ್ಜಿಯನ್ ಪ್ರಜೆ ಹಾಗೂ ಇಬ್ಬರು ಸರ್ಬಿಯನ್ ಭದ್ರತಾ ಸಿಬ್ಬಂದಿ ಇದ್ದಾರೆ ಎಂದು ವರದಿಯಾಗಿದೆ.

ಪೋಲಾರ್ ಮೂವ್‌ಮೆಂಟ್ ಶಿಪ್ಪಿಂಗ್ ಒಡೆತನದ ಈ ಹಡಗು ಮೊಗಾದಿಶುವಿನಲ್ಲಿರುವ ಟರ್ಕಿಶ್ ಮಿಲಿಟರಿಗೆ ಶಸ್ತ್ರಾಸ್ತ್ರಗಳ ಜತೆಗೆ ಸಂವಹನ ಹಾಗೂ ಉಪಗ್ರಹ ಉಪಕರಣಗಳನ್ನು ಸಾಗಿಸುತ್ತಿತ್ತು ಎಂದು ವರದಿಗಳು ತಿಳಿಸಿವೆ. ಸುಮಾರು ಎಂಟು ಮಂದಿ ಕಡಲ್ಗಳ್ಳರು ಹಡಗಿನ ಮೇಲೆ ದಾಳಿ ನಡೆಸಿ ಬಳಿಕ ಅದನ್ನು ಪಂಟ್ಲ್ಯಾಂಡ್‌ನ ಡಂಗೊರೊಯೊ ಜಿಲ್ಲೆಯ ಗರ್ಮಾಲ್ ಬಳಿಯ ಕರಾವಳಿ ಪ್ರದೇಶದತ್ತ ಕೊಂಡೊಯ್ದಿದ್ದಾರೆ ಎನ್ನಲಾಗಿದೆ.

ಏಪ್ರಿಲ್ 26ರಂದು ನಡೆದ M/V ಸ್ವಾರ್ಡ್ ಹಡಗು ಅಪಹರಣದಲ್ಲಿ ಭಾಗಿಯಾಗಿದ್ದ ಕಡಲ್ಗಳ್ಳರೊಂದಿಗೆ ಈ ಗುಂಪಿಗೆ ಸಂಪರ್ಕವಿದೆ ಎಂದು ಸೊಮಾಲಿಯಾ ಅಧಿಕಾರಿ ತಿಳಿಸಿದ್ದಾರೆ.

ಹೈಜಾಕ್ ನಡೆದ ಪ್ರದೇಶದ ಮೇಲೆ ಟರ್ಕಿಯ ಎರಡು ಹಡಗುಗಳು, ಹೆಲಿಕಾಪ್ಟರ್‌ಗಳು ಹಾಗೂ ಡ್ರೋನ್‌ಗಳ ಮೂಲಕ ನಿಗಾ ವಹಿಸಲಾಗಿದೆ ಎಂದು ವರದಿಯಾಗಿದೆ.

ಈವರೆಗೆ M/V LUTUF ಹಡಗು, ಅದರಲ್ಲಿರುವ ಆರು ಭಾರತೀಯರು ಸೇರಿದಂತೆ ಸಿಬ್ಬಂದಿ ಹಾಗೂ ಸರಕುಗಳ ಕುರಿತು ಸಂಪೂರ್ಣ ಮಾಹಿತಿ ಲಭ್ಯವಾಗಿಲ್ಲ. ಭಾರತೀಯ ವಿದೇಶಾಂಗ ಸಚಿವಾಲಯದಿಂದಲೂ ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.

ಪಶ್ಚಿಮ ಏಷ್ಯಾದ ಸಾಗರ ವಲಯದಲ್ಲಿ ಸಂಘರ್ಷದ ಪರಿಸ್ಥಿತಿ ಮುಂದುವರಿದಿರುವ ಬೆನ್ನಲ್ಲೇ ಸೊಮಾಲಿಯಾ ಕರಾವಳಿಯಲ್ಲಿ ಕಡಲ್ಗಳ್ಳರ ಚಟುವಟಿಕೆ ಹೆಚ್ಚಾಗಿರುವುದು ಆತಂಕ ಮೂಡಿಸಿದೆ. 2026ರ ಮೊದಲ ಐದು ತಿಂಗಳಲ್ಲಿ ಸೊಮಾಲಿ ಸಮುದ್ರದಲ್ಲಿ 17ಕ್ಕೂ ಹೆಚ್ಚು ಹಡಗುಗಳು ಕಡಲ್ಗಳ್ಳರ ದಾಳಿಗೆ ಗುರಿಯಾಗಿರುವುದಾಗಿ ವರದಿಯಾಗಿದೆ.

ಪ್ರಜ್ವಲ್ ರೇವಣ್ಣ ಪ್ರಕರಣದ ಪ್ರಮುಖ ಸಾಕ್ಷಿಗೆ ಜೀವ ಬೆದರಿಕೆ: ಭದ್ರತೆ ನೀಡಲು ಕೋರ್ಟ್‌ ಸೂಚನೆ

0

ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣದ ವಿಚಾರಣೆ ವೇಳೆ ಪ್ರಮುಖ ಸಾಕ್ಷಿದಾರರಿಗೆ ಬೆದರಿಕೆ ಕರೆಗಳು ಬರುತ್ತಿರುವ ಗಂಭೀರ ವಿಷಯ ನ್ಯಾಯಾಲಯದ ಗಮನಕ್ಕೆ ಬಂದಿದೆ.

ಹೊಳೆನರಸೀಪುರ ಮೂಲದ ಮಹಿಳೆಯೊಬ್ಬರು ಆಗಸ್ಟ್ 20ರಂದು ನಡೆದ ವಿಚಾರಣೆ ವೇಳೆ, ಮುಖ್ಯ ವಿಚಾರಣೆ ಮುಗಿದ ಬಳಿಕ ಅಪರಿಚಿತರಿಂದ ನಿರಂತರವಾಗಿ ದೂರವಾಣಿ ಬೆದರಿಕೆ ಕರೆಗಳು ಬರುತ್ತಿವೆ ಎಂದು ನ್ಯಾಯಾಧೀಶರ ಮುಂದೆ ಅಳಲು ತೋಡಿಕೊಂಡಿದ್ದಾರೆ. ತಮ್ಮೊಂದಿಗೆ ಹಾಗೂ ತಮ್ಮ ಮಗನಿಗೆ ಯಾವುದೇ ಅಪಾಯ ಸಂಭವಿಸಿದರೆ ಪ್ರಕರಣದ ಆರೋಪಿಗಳೇ ಹೊಣೆಗಾರರು ಎಂದು ಅವರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ವಿಷಯವನ್ನು ಗಂಭೀರವಾಗಿ ಪರಿಗಣಿಸಿದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ, ಬೆದರಿಕೆ ಕರೆಗಳ ಕುರಿತು ಸಮಗ್ರ ತನಿಖೆ ನಡೆಸುವಂತೆ ವಿಶೇಷ ತನಿಖಾ ತಂಡಕ್ಕೆ (SIT) ನಿರ್ದೇಶನ ನೀಡಿದೆ. ಮುಂದಿನ ವಿಚಾರಣೆಯೊಳಗೆ ತನಿಖೆಯ ವಿವರವಾದ ವರದಿ ಸಲ್ಲಿಸುವಂತೆಯೂ ಸೂಚಿಸಿದೆ.

ಅಲ್ಲದೆ, ಸಾಕ್ಷಿದಾರೆಯ ಸುರಕ್ಷತೆಗೆ ಅಗತ್ಯವಿರುವ ಪೊಲೀಸ್ ಭದ್ರತೆ ಒದಗಿಸುವಂತೆ ಎಸ್‌ಐಟಿ ಹಾಗೂ ಸಿಐಡಿ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಿಗೆ ನ್ಯಾಯಾಲಯ ನಿರ್ದೇಶನ ನೀಡಿದೆ.

ಪ್ರಕರಣದ ಹಿನ್ನೆಲೆ ನೋಡಿದರೆ, 2019ರಲ್ಲಿ ಸಂಸದರ ಕೋಟಾದಲ್ಲಿ ಪುತ್ರನಿಗೆ ಕೇಂದ್ರೀಯ ವಿದ್ಯಾಲಯದಲ್ಲಿ ಸೀಟು ಕೊಡಿಸುವ ಸಂಬಂಧ ಮಹಿಳೆ ಪ್ರಜ್ವಲ್ ರೇವಣ್ಣ ಅವರನ್ನು ಸಂಪರ್ಕಿಸಿದ್ದರು. ಈ ವೇಳೆ ಮಹಿಳೆಯ ಮೊಬೈಲ್‌ ಸಂಖ್ಯೆ ಪಡೆದುಕೊಂಡಿದ್ದ ಪ್ರಜ್ವಲ್‌, 2019ರಿಂದ 2021ರ ಅವಧಿಯಲ್ಲಿ ಪದೇಪದೇ ಕರೆ ಮಾಡಿ ಅಶ್ಲೀಲವಾಗಿ ಕಾಣಿಸಿಕೊಳ್ಳುವಂತೆ ಒತ್ತಾಯಿಸಿದ್ದರು ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಮಹಿಳೆಯ ಅನುಮತಿಯಿಲ್ಲದೆ ವಿಡಿಯೊ ಹಾಗೂ ಫೋಟೊಗಳನ್ನು ಸಂಗ್ರಹಿಸಿ, ಕರೆ ಸ್ವೀಕರಿಸದಿದ್ದರೆ ಅವುಗಳನ್ನು ಬಹಿರಂಗಪಡಿಸುವುದಾಗಿ ಬೆದರಿಕೆ ಹಾಕಿದ್ದರು ಎಂಬ ಆರೋಪವೂ ಇದೆ.

ಈ ಸಂಬಂಧ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ಕಿರುಕುಳ, ವಿವಸ್ತ್ರಗೊಳಿಸಲು ಬೆದರಿಕೆ, ಹಿಂಬಾಲಿಸುವಿಕೆ ಹಾಗೂ ಕ್ರಿಮಿನಲ್ ಬೆದರಿಕೆ ಸೇರಿದಂತೆ ಐಪಿಸಿ ವಿವಿಧ ಸೆಕ್ಷನ್‌ಗಳ ಅಡಿ ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಪ್ರಜ್ವಲ್ ರೇವಣ್ಣ ವಿರುದ್ಧ ಒಟ್ಟು ನಾಲ್ಕು ಪ್ರಕರಣಗಳು ದಾಖಲಾಗಿದ್ದು, ಅವುಗಳಲ್ಲಿ ಮೂರು ಅತ್ಯಾಚಾರ ಪ್ರಕರಣಗಳು ಹಾಗೂ ಮಹಿಳೆಯನ್ನು ವಿವಸ್ತ್ರಗೊಳಿಸಿದ ಪ್ರಕರಣ ಸೇರಿವೆ. ಒಂದು ಪ್ರಕರಣದ ವಿಚಾರಣೆ ಈಗಾಗಲೇ ಪೂರ್ಣಗೊಂಡು ಶಿಕ್ಷೆ ವಿಧಿಸಲಾಗಿದೆ.

ಸರ್ಕಾರದ ಆದಾಯ ಸಂಗ್ರಹ ಹೆಚ್ಚಳಕ್ಕೆ ಮಾರ್ಗದರ್ಶನ ನೀಡಿ: ಸಿಎಂ ಡಿ ಕೆ ಶಿವಕುಮಾರ್

0

ಬೆಂಗಳೂರು: “ಹಣಕಾಸಿನ ವಿಚಾರದಲ್ಲಿ ಸರ್ಕಾರಕ್ಕೆ ಸಲಹೆ ಹಾಗೂ ಆದಾಯ ಸಂಗ್ರಹ ಹೆಚ್ಚಳಕ್ಕೆ ಮಾರ್ಗದರ್ಶನವಿರಲಿ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಕರೆ ನೀಡಿದರು. ಬೆಂಗಳೂರಿನ ಅರಮನೆ ಮೈದಾನದಲ್ಲಿ ದಿ ಇನ್ಸ್ಟಿಟ್ಯೂಟ್ ಆಫ್ ಚಾರ್ಟೆಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ ಶುಕ್ರವಾರ ಆಯೋಜಿಸಿದ್ದ “ಸಂವಾದ ಸಮ್ಮೇಳನ” ಕಾರ್ಯಕ್ರಮದಲ್ಲಿ ಸಿಎಂ ಡಿ ಕೆ ಶಿವಕುಮಾರ್ ಅವರು ಮಾತನಾಡಿದರು.

“ನಮ್ಮ ಸರ್ಕಾರ ತೆರೆದ ಪುಸ್ತಕ. ಹೊಸ ವಿಚಾರ, ಪರಿಹಾರಕ್ಕೆ ನಾವು ಮುಕ್ತರಾಗಿದ್ದೇವೆ. ನಮ್ಮ ತಪ್ಪುಗಳು, ಸಂಪನ್ಮೂಲ ಸೋರಿಕೆ ತಡೆಗಟ್ಟಲು ನಿಮ್ಮ ಸಲಹೆಗಳನ್ನು ನೀಡಿ. ನಿಂಬೆಗಿಂತ ಶ್ರೇಷ್ಠವಾದ ಹುಳಿ, ದುಂಬಿಗಿಂತ ಶ್ರೇಷ್ಠವಾದ ಕಪ್ಪು, ಶಿವನಿಗಿಂತ ದೊಡ್ಡ ದೇವರು, ನಂಬಿಕೆಗಿಂತ ದೊಡ್ಡ ಗುಣ ಮತ್ತೊಂದಿಲ್ಲ ಎಂದು ಸರ್ವಜ್ಞ ಹೇಳಿದ್ದಾರೆ. ನೀವು ನಂಬಿಕೆಯ ರಕ್ಷಕರು. ನಂಬಿಕೆ ಎಂಬುದು ನಿಮ್ಮ ರಕ್ತದಲ್ಲೇ ಬಂದಿದ್ದು, ನೀವು ಅದನ್ನು ಉಳಿಸಿಕೊಳ್ಳಬೇಕು. ನೀವು ಹೇಳಿದ್ದನ್ನು ನಾವು ನಂಬುತ್ತೇವೆ. ನೀವು ನಮ್ಮ ಬದುಕು, ಆಸ್ತಿ ರಕ್ಷಿಸಿ ಆದಾಯಕ್ಕೆ ಮಾರ್ಗದರ್ಶನ ನೀಡಬೇಕು. ನಮ್ಮ ತಪ್ಪುಗಳನ್ನು ನಿವಾರಣೆ ಮಾಡುವ ಸಾಮಾರ್ಥ್ಯ ನಿಮಗಿದೆ. ನೀವು ದೇಶ ಕಟ್ಟುತ್ತಿದ್ದು, ನಿಮ್ಮ ಬಗ್ಗೆ ದೇಶಕ್ಕೆ ಹೆಮ್ಮೆ ಇದೆ” ಎಂದು ಪ್ರಶಂಸಿಸಿದರು.

“ಪ್ರಾಮಾಣಿಕ ತೆರಿಗೆ ಪಾವತಿದಾರರಿಗೆ ಅಧಿಕಾರಿಗಳು ಮಾನಸಿಕ ಕಿರುಕುಳ ನೀಡಿ ಕುಗ್ಗಿಸುತ್ತಾರೆ. ಯಾರು ಕಳ್ಳತನ ಮಾಡುತ್ತಾರೆ ಅವರಿಗೆ ಪ್ರಶ್ನೆ ಮಾಡುವುದಿಲ್ಲ. ಈ ದೇಶದಲ್ಲಿ 12 ಲಕ್ಷ ಉದ್ಯಮಿಗಳು ಈ ದೇಶವನ್ನು ತ್ಯಜಿಸಿದ್ದಾರೆ. ಐಟಿ, ಇಡಿ, ಸಿಬಿಐ ಸಹವಾಸ ಸಾಕು ಎಂದು ಹೋಗುತ್ತಿದ್ದಾರೆ. ತೊಂದರೆ ಕೊಡುವುದೇ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ಕೆಲಸ. ಕೆಲವು ವರ್ಷಗಳ ಹಿಂದೆ ಗುಜರಾತ್ ಗೆ ಹೋಗಿದ್ದಾಗ ಅಲ್ಲಿ 70% ನಗದಿನಲ್ಲೇ ನಡೆಯುತ್ತಿದೆ. ಕೇವಲ 30% ಮಾತ್ರ ವೈಟ್ ಅಲ್ಲಿ ನಡೆಯುತ್ತಿದೆ. ನಮ್ಮ ಕರ್ನಾಟಕದಲ್ಲಿ 90% ವೈಟ್ ಮೂಲಕ ವ್ಯವಹಾರಗಳು ನಡೆಯುತ್ತಿವೆ. ಬೇರೆ ರಾಜ್ಯಗಳಿಗೆ ಹೋಲಿಸಿದರೆ ನಾವು ಶಿಸ್ತುಬದ್ಧರಾಗಿದ್ದೇವೆ” ಎಂದರು.

“ಕರ್ನಾಟಕ ಆರ್ಥಿಕ ಶಕ್ತಿಯಾಗಿ ಬೆಳೆಯುತ್ತಿದ್ದು, ನಿಮ್ಮ ಮಾರ್ಗದರ್ಶನವಿಲ್ಲದೇ ಅವರು ಯಶಸ್ಸು ಸಾಧಿಸಲು ಸಾಧ್ಯವಿಲ್ಲ. ದಕ್ಷಿಣ ಭಾರತ ಇಡಿ ದೇಶದ ಪ್ರಗತಿಯ ಇಂಧನವಾಗಿದೆ. ದಕ್ಷಿಣ ಭಾರತವಿಲ್ಲದೆ ಭಾರತದ ಪ್ರಗತಿ ಸಾಧ್ಯವಿಲ್ಲ ಎಂದು ಕೇಂದ್ರ ಗೃಹಸಚಿವ ಅಮಿತ್ ಶಾ ಅವರ ಮುಂದೆ ವಾದ ಮಂಡಿಸಿದೆವು. ಇಡೀ ವಿಶ್ವ ಭಾರತವನ್ನು ಬೆಂಗಳೂರು ಮೂಲಕ ನೋಡುತ್ತಿದೆ. ಬೆಂಗಳೂರಿನಲ್ಲಿ 2 ಲಕ್ಷ ವಿದೇಶಿ ಪಾಸ್ ಪೋರ್ಟ್ ದಾರರು ಕಾರ್ಯನಿರ್ವಹಿಸುತ್ತಿದ್ದಾರೆ. ಹೊರ ರಾಜ್ಯಗಳಿಂದ ಬರುವ ಬಂಡವಾಳ ಹೂಡಿಕೆದಾರರಿಗೆ ನೀವು ಉತ್ತಮ ಸಲಹೆ ನೀಡುತ್ತಿದ್ದೀರಿ. ಹೊಸ ಹೂಡಿಕೆ, ಉದ್ಯಮ, ಉದ್ಯೋಗ ಸೃಷ್ಟಿ, ಅನ್ವೇಷಣೆ, ರಫ್ತಿಗೆಗೆ ಕರ್ನಾಟಕ ಅತ್ಯುತ್ತಮ ಕೇಂದ್ರವಾಗಿದೆ” ಎಂದು ಹೇಳಿದರು.

“ಈ ಕಾರ್ಯಕ್ರಮಕ್ಕೆ ಒಪ್ಪಿಕೊಂಡಾಗ ಅಧಿವೇಶನ ನಡೆಯುತ್ತದೆ ಎಂದು ನನಗೆ ಗೊತ್ತಿರಲಿಲ್ಲ. ಆದರೆ ಈಗ ಅಧಿವೇಶನ ನಡೆಯುತ್ತಿದೆ. ವಿರೋಧ ಪಕ್ಷದ ಬಿಜೆಪಿ ಸ್ನೇಹಿತರಿಗೆ ನನ್ನನ್ನು ಹಾಗೂ ನನ್ನ ಸರ್ಕಾರವನ್ನು ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ನನ್ನ ಆಲೋಚನೆಗಳು ಸ್ಪಷ್ಟವಾಗಿದ್ದು, ನಮ್ಮ ಸರ್ಕಾರ ಜನಸಾಮಾನ್ಯರ ವಿಚಾರದಲ್ಲಿ ಕೈಗೊಳ್ಳುತ್ತಿರುವ ನೀತಿಗಳಿಂದಾಗಿ ಅವರಿಗೆ ನನ್ನ ವಿರುದ್ಧ ಹೋರಾಟ ಮಾಡಲು ಯಾವುದೇ ಅವಕಾಶಗಳಿಲ್ಲ. ಅಸೂಯೆಗೆ ಮದ್ದಿಲ್ಲ. ಹೀಗಾಗಿ ಅವರು ನಮಗೆ ಚರ್ಚೆಗೆ ಅವಕಾಶ ನೀಡುತ್ತಿಲ್ಲ” ಎಂದರು.

“ನಿನ್ನೆ ಚೆನ್ನೈನಲ್ಲಿ ನಡೆದ ದಕ್ಷಿಣ ವಲಯ ಮಂಡಳಿ ಸಭೆಯಲ್ಲಿ ನಮ್ಮ ರಾಜ್ಯದ ಸಮಸ್ಯೆಗಳ ಬಗ್ಗೆ ಪ್ರಸ್ತಾಪ ಮಾಡಿದ್ದೇನೆ. ಕರ್ನಾಟಕ ಸೇರಿದಂತೆ ದಕ್ಷಿಣ ಭಾರತ ದೇಶದ ಪ್ರಗತಿಗೆ ಸಹಕಾರಿಯಾಗಿದೆ. ನಾವು ಹಚ್ಚುವ ಜ್ಯೋತಿ ಹೇಗೆ ಕೆಳಗಿನಿಂದ ಮೇಲಕ್ಕೆ ಬೆಳಗುತ್ತದೆಯೋ ಅದೇ ರೀತಿ ದೇಶದ ಪ್ರಗತಿ ಕೂಡ ದಕ್ಷಿಣ ಭಾರತದಿಂದ ಬೆಳಗುತ್ತಿದೆ. ದೀಪ ಹಚ್ಚಿದಾಗ ಅದರ ಬೆಳಕು ಎಲ್ಲರಿಗೂ ಕಾಣುತ್ತದೆ. ಆದರೆ ಅದರಲ್ಲಿರುವ ಬತ್ತಿ ಹಾಗೂ ಎಣ್ಣೆ ಯಾರಿಗೂ ಕಾಣುವುದಿಲ್ಲ. ನಮಗೆ ನ್ಯಾಯುತ ಪಾಲು ಬೇಕು. ನಾವು ನೀಡುತ್ತಿರುವ ಕೊಡುಗೆ ಹಾಗೂ ಪಡೆಯುತ್ತಿರುವ ಅನುದಾನದಲ್ಲಿರುವ ವ್ಯತ್ಯಾಸದ ಬಗ್ಗೆ ವಿಚಾರ ಮಂಡಿಸಲಾಗಿದೆ. ನಾವು ಹಚ್ಚು ಜ್ಯೋತಿ ಅಷ್ಟು ಸುಲಭವಾಗಿ ಆರುವುದಿಲ್ಲ. ರಾಜ್ಯದ ಜನರ ಬದುಕಿನಲ್ಲಿ ಬೆಳಕು ತರುತ್ತದೆ” ಎಂದು ತಿಳಿಸಿದರು.

“ಕರ್ನಾಟಕ ದೇಶದಲ್ಲೇ ಎರಡನೇ ಅತಿ ಹೆಚ್ಚು ತೆರಿಗೆ ಪಾವತಿಸುತ್ತಿರುವ ರಾಜ್ಯ. ಭಾರತದ ಸಾಫ್ಟ್‌ವೇರ್ ರಪ್ತಿನಲ್ಲಿ ಕರ್ನಾಟಕದ ಕೊಡುಗೆ ಶೇ.42ರಷ್ಟಿದೆ. ಇಲ್ಲಿರುವ ಪ್ರತಿಭೆಗಳನ್ನು ನೋಡಿ ವಿಶ್ವದ ಪ್ರಮುಖ 500 ಕಂಪನಿಗಳು ನಮ್ಮಲ್ಲಿ ಕಾರ್ಯನಿರ್ವಹಿಸುತ್ತಿವೆ. ಐಟಿ ಬಿಟಿ ಸೇರಿದಂತೆ ತಂತ್ರಜ್ಞಾನ, ಏರೋಸ್ಪೇಸ್ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲಿ ಕರ್ನಾಟಕ ಮುಂದಾಳತ್ವ ವಹಿಸುತ್ತಿದೆ” ಎಂದರು.

“ಈ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿರುವುದು ಸಂತೋಷ ತಂದಿದೆ. ನಿಮ್ಮ ಮಾರ್ಗದರ್ಶನವಿಲ್ಲದೆ ರಾಜ್ಯ ಈ ಪ್ರಗತಿ ಸಾಧಿಸುತ್ತಿರಲಿಲ್ಲ. ದೇಶದ ಆರ್ಥಿಕತೆ ಉತ್ತಮವಾಗಿ ನಡೆಯುತ್ತಿರುವುದರ ಹಿಂದೆ ನಿಮ್ಮ ಮಾರ್ಗದರ್ಶನವಿದೆ. ದುಡ್ಡು, ಬ್ಲಡ್ ಎರಡೂ ಹರಿಯುತ್ತಿರಬೇಕು. ಬ್ಲಡ್ ಒಂದೇ ಕಡೆ ಇದ್ದರೆ ಆರೋಗ್ಯ ಹದಗೆಡುತ್ತದೆ, ಹಣ ಒಂದೇ ಕಡೆ ಸೇರಿಕೊಂಡರೆ ಆದಾಯ ತೆರಿಗೆ, ಜಿಎಸ್ ಟಿ, ಕಳ್ಳರು ಬರುತ್ತಾರೆ ಎಂದು ಸಾಯಿಬಾಬಾ ಅವರು ಒಮ್ಮೆ ಹೇಳಿದ್ದರು” ಎಂದು ಸ್ಮರಿಸಿದರು.

ಸಾರ್ವಜನಿಕರ ಸಮ್ಮುಖದಲ್ಲಿ ನಡೆದರೆ ಮಾತ್ರ ಎಸ್ಸಿ/ಎಸ್ಟಿ ಕಾಯ್ದೆ ಅನ್ವಯ: ಸುಪ್ರೀಂ ಕೋರ್ಟ್

0

ನವದೆಹಲಿ: ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕಾಯ್ದೆ ಅಡಿ ಅಪರಾಧವೆಂದು ಪರಿಗಣಿಸಲಾಗುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ.

ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರನ್ನೊಳಗೊಂಡ ಪೀಠವು ಉತ್ತರ ಪ್ರದೇಶದ ಶಾಲೆಯೊಂದರ ಮ್ಯಾನೇಜರ್ ವಿರುದ್ಧ ಎಸ್ಸಿ/ಎಸ್ಟಿ ಕಾಯ್ದೆಯಡಿ ದಾಖಲಾಗಿದ್ದ ಪ್ರಕರಣದ ವಿಚಾರಣೆ ನಡೆಸಿ, ಕಾಯ್ದೆಯ ಸೆಕ್ಷನ್ 3(2)(r) ಮತ್ತು 3(1)(s) ಅಡಿಯಲ್ಲಿ ನಡೆಯುತ್ತಿದ್ದ ಕಾನೂನು ಪ್ರಕ್ರಿಯೆಯನ್ನು ರದ್ದುಗೊಳಿಸಿದೆ.

ಕಾಯ್ದೆಯ ಪ್ರಕಾರ ಸಾರ್ವಜನಿಕರ ವೀಕ್ಷಣೆಯ ವ್ಯಾಪ್ತಿಯಲ್ಲಿರುವ ಸ್ಥಳ ಎಂದರೆ ಆರೋಪಿಯು ಸಂತ್ರಸ್ತನಿಗೆ ಆಡಿದ ಮಾತುಗಳನ್ನು ಸಾರ್ವಜನಿಕರು ನೋಡಲು ಅಥವಾ ಕೇಳಲು ಸಾಧ್ಯವಾಗುವಂತಹ ತೆರೆದ ಸ್ಥಳವಾಗಿರಬೇಕು ಎಂದು ಪೀಠ ಅಭಿಪ್ರಾಯಪಟ್ಟಿದೆ. ಘಟನೆಯು ಸಾರ್ವಜನಿಕರು ಇಲ್ಲದ ನಾಲ್ಕು ಗೋಡೆಗಳ ಮಧ್ಯೆ ನಡೆದರೆ ಅದನ್ನು ಸಾರ್ವಜನಿಕ ವೀಕ್ಷಣೆಯ ಸ್ಥಳದಲ್ಲಿ ನಡೆದಿದೆ ಎಂದು ಹೇಳಲಾಗದು ಎಂದು ಪೀಠ ಹೇಳಿದೆ.

ಎಫ್‌ಐಆರ್‌ನಲ್ಲಿ ಶಾಲಾ ಮ್ಯಾನೇಜರ್ ಅವರೇ ನಿರ್ದಿಷ್ಟವಾಗಿ ಯಾವುದೇ ಜಾತಿ ನಿಂದನೆಯ ಮಾತುಗಳನ್ನು ಆಡಿದ್ದಾರೆ ಎಂದು ಉಲ್ಲೇಖಿಸಿಲ್ಲ ಎಂದ ಪೀಠ, ಪ್ರಾಸಿಕ್ಯೂಷನ್ ಒದಗಿಸಿರುವ ದಾಖಲೆಗಳು ಗರಿಷ್ಠ ಪಕ್ಷ ಉಭಯ ಬಣಗಳ ನಡುವಿನ ಜಗಳ ಮತ್ತು ಗಲಾಟೆಯನ್ನು ಮಾತ್ರ ತೋರಿಸುತ್ತವೆಯೇ ಹೊರತು ಮ್ಯಾನೇಜರ್ ಯಾವುದೇ ನಿರ್ದಿಷ್ಟ ಜಾತಿ ನಿಂದನೆಯ ಮಾತುಗಳನ್ನಾಡಿರುವುದನ್ನು ದೃಢಪಡಿಸುವುದಿಲ್ಲ ಎಂದು ಹೇಳಿದೆ. ಶಾಲಾ ಮ್ಯಾನೇಜರ್ ವಿರುದ್ಧ ಎಸ್ಸಿ/ಎಸ್ಟಿ (ದೌರ್ಜನ್ಯ ತಡೆ) ಕಾಯ್ದೆಯಡಿ ದಾಖಲಾಗಿದ್ದ ಪ್ರಕ್ರಿಯೆಗಳನ್ನು ರದ್ದುಗೊಳಿಸುವುದಾಗಿ ಪೀಠ ಹೇಳಿದ್ದು, ಆದರೆ ಪ್ರಕರಣದಲ್ಲಿ ದಾಖಲಾಗಿರುವ ಇತರ ಆರೋಪಗಳಿಗೆ ಸಂಬಂಧಿಸಿದ ಕಾನೂನು ಪ್ರಕ್ರಿಯೆಗಳು ಮುಂದುವರಿಯಲಿವೆ ಎಂದು ಸ್ಪಷ್ಟಪಡಿಸಿದೆ.

ಏನಿದು ಪ್ರಕರಣ? ಶಾಲೆಯಲ್ಲಿ ಇಬ್ಬರು ವಿದ್ಯಾರ್ಥಿಗಳ ನಡುವೆ ಜಗಳ ನಡೆದ ಬಳಿಕ ಅವರ ತಂದೆ 2020ರ ಜನವರಿ 24ರಂದು ಶಾಲಾ ಮ್ಯಾನೇಜರ್ ಅವರನ್ನು ಸಂಪರ್ಕಿಸಿದ್ದರು. ಈ ವೇಳೆ ಮ್ಯಾನೇಜರ್ ಹಾಗೂ ಸಿಬ್ಬಂದಿ ತಮ್ಮ ಮೇಲೆ ಹಲ್ಲೆ ನಡೆಸಿ ಜಾತಿ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಿದ್ದರು. ಗಲಾಟೆ ನಡೆದ ಮರುದಿನವೇ ಗಲಭೆ, ಗಾಯ, ಅಕ್ರಮ ಬಂಧನ ಮತ್ತು ಉದ್ದೇಶಪೂರ್ವಕ ಅವಮಾನದ ಆರೋಪಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿತ್ತು. ಇದರೊಂದಿಗೆ ಎಸ್ಸಿ/ಎಸ್ಟಿ (ದೌರ್ಜನ್ಯ ತಡೆ) ಕಾಯ್ದೆಯ ಸೆಕ್ಷನ್ 3(1)(r) ಮತ್ತು 3(1)(s) ಅಡಿಯಲ್ಲಿಯೂ ಪ್ರಕರಣ ದಾಖಲಿಸಲಾಗಿತ್ತು.

ಈ ಪ್ರಕ್ರಿಯೆಗಳನ್ನು ಪ್ರಶ್ನಿಸಿ ಶಾಲಾ ಮ್ಯಾನೇಜರ್ ಅಲಹಾಬಾದ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಘಟನೆ ನಡೆದಿದೆ ಎನ್ನಲಾದ ಶಾಲೆಯ ಕೊಠಡಿಯು ಸಂಪೂರ್ಣ ಮುಚ್ಚಲ್ಪಟ್ಟಿದ್ದು, ಕಿಟಕಿಗಳಿಲ್ಲದ ಹಾಗೂ ಸಾರ್ವಜನಿಕರಿಗೆ ಪ್ರವೇಶವಿಲ್ಲದ ಸ್ಥಳವಾಗಿತ್ತು ಎಂದು ಅವರು ವಾದಿಸಿದ್ದರು. ಜಾತಿ ನಿಂದನೆ ನಡೆದಿದೆ ಎನ್ನಲಾದ ಸಮಯದಲ್ಲಿ ತಾವು ಕೊಠಡಿಯೊಳಗೆ ಇರಲಿಲ್ಲ ಎಂದು ಸಾಕ್ಷಿಗಳು ಹೇಳಿರುವುದನ್ನೂ ಅವರು ನ್ಯಾಯಾಲಯದ ಗಮನಕ್ಕೆ ತಂದಿದ್ದರು. ಆದರೆ ಅಲಹಾಬಾದ್ ಹೈಕೋರ್ಟ್ ಎಸ್ಸಿ/ಎಸ್ಟಿ ಕಾಯ್ದೆಯ ಅಡಿ ವಿಚಾರಣೆ ನಡೆಸಲು ಅನುಮತಿ ನೀಡಿತ್ತು. ಈ ಆದೇಶವನ್ನು ಪ್ರಶ್ನಿಸಿ ಮ್ಯಾನೇಜರ್ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು.

ಬರ ವೀಕ್ಷಣೆಯಲ್ಲೂ ಬಣ ರಾಜಕೀಯ ಬಿಸಿ: ಎಂ.ಬಿ. ಪಾಟೀಲ್ ಜೊತೆ ಯಶವಂತರಾಯಗೌಡ ಪಾಟೀಲ್ ಗೈರು

0

ವಿಜಯಪುರ: ರಾಜ್ಯ ಸಚಿವ ಸಂಪುಟ ವಿಸ್ತರಣೆ ವೇಳೆ ಬಹಿರಂಗವಾಗಿದ್ದ ಸಚಿವ ಎಂ.ಬಿ. ಪಾಟೀಲ್ ಹಾಗೂ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್ ನಡುವಿನ ಅಸಮಾಧಾನ ಇದೀಗ ಮತ್ತೆ ಮುನ್ನೆಲೆಗೆ ಬಂದಿದೆ. ಜಿಲ್ಲೆಯ ಬರ ಪರಿಸ್ಥಿತಿ ಪರಿಶೀಲನೆಗೆ ಸಚಿವ ಎಂ.ಬಿ. ಪಾಟೀಲ್ ಆಗಮಿಸಿದ ವೇಳೆ ಶಾಸಕ ಯಶವಂತರಾಯಗೌಡ ಪಾಟೀಲ್ ಗೈರಾಗಿರುವುದು ಕಾಂಗ್ರೆಸ್ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.

ನೂತನ ಜಿಲ್ಲಾ ಉಸ್ತುವಾರಿ ಸಚಿವರಿಗೆ ಜಿಲ್ಲೆಯ ಪ್ರತಿಯೊಂದು ವಿಧಾನಸಭಾ ಕ್ಷೇತ್ರದಲ್ಲಿ ಬರ ವೀಕ್ಷಣೆ ನಡೆಸಿ ವರದಿ ಸಲ್ಲಿಸುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೂಚಿಸಿದ್ದರು. ಅದರಂತೆ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ್ ಇಂಡಿ ಕ್ಷೇತ್ರದಲ್ಲಿ ಬರ ಪರಿಸ್ಥಿತಿ ಪರಿಶೀಲನೆ ನಡೆಸಿದರು. ಆದರೆ ಕ್ಷೇತ್ರದ ಶಾಸಕ ಯಶವಂತರಾಯಗೌಡ ಪಾಟೀಲ್ ಕಾರ್ಯಕ್ರಮಕ್ಕೆ ಗೈರಾಗಿದ್ದರು.

ಸಚಿವ ಸ್ಥಾನ ಕೈತಪ್ಪಿದ ಬಳಿಕ ಎಂ.ಬಿ. ಪಾಟೀಲ್ ವಿರುದ್ಧ ಬಹಿರಂಗ ಅಸಮಾಧಾನ ವ್ಯಕ್ತಪಡಿಸಿದ್ದ ಯಶವಂತರಾಯಗೌಡ ಪಾಟೀಲ್, ತಮ್ಮ ರಾಜೀನಾಮೆಯನ್ನೂ ಸಲ್ಲಿಸಿದ್ದರು. ಬಳಿಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಸೇರಿದಂತೆ ಕಾಂಗ್ರೆಸ್‌ನ ಹಲವು ನಾಯಕರು ಮಧ್ಯಪ್ರವೇಶಿಸಿ ಅವರನ್ನು ಮನವೊಲಿಸಿದ್ದರು.

ರಾಜ್ಯ ಮಟ್ಟದಲ್ಲಿ ಅಸಮಾಧಾನ ಶಮನವಾದಂತೆ ಕಂಡುಬಂದಿದ್ದರೂ, ವಿಜಯಪುರ ಜಿಲ್ಲೆಯಲ್ಲಿ ಇಬ್ಬರು ನಾಯಕರ ನಡುವಿನ ಮುನಿಸು ಮುಂದುವರಿದಿರುವುದು ಇದೀಗ ಬರ ವೀಕ್ಷಣೆ ವೇಳೆ ಮತ್ತೆ ಬಹಿರಂಗವಾಗಿದೆ.

ಮೊದಲ ಸಚಿವ ಸಂಪುಟ ವಿಸ್ತರಣೆಯಲ್ಲಿ ವಿಜಯಪುರ ಜಿಲ್ಲೆಯಿಂದ ಎಂ.ಬಿ. ಪಾಟೀಲ್ ಅವರಿಗೆ ಮಾತ್ರ ಸಚಿವ ಸ್ಥಾನ ದೊರೆತಿತ್ತು. ಎರಡನೇ ಹಂತದ ಸಂಪುಟ ವಿಸ್ತರಣೆಯಲ್ಲಿ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್ ಹಾಗೂ ಮುದ್ದೇಬಿಹಾಳ ಶಾಸಕ ಸಿ.ಎಸ್. ನಾಡಗೌಡ ಸಚಿವ ಸ್ಥಾನಕ್ಕಾಗಿ ಪ್ರಯತ್ನ ನಡೆಸಿದ್ದರು. ಆದರೆ ಇಬ್ಬರಿಗೂ ಸಚಿವ ಸ್ಥಾನ ಸಿಗಲಿಲ್ಲ.

ಸಚಿವ ಸ್ಥಾನ ಕೈತಪ್ಪಲು ಎಂ.ಬಿ. ಪಾಟೀಲ್ ಅವರೇ ಕಾರಣ ಎಂದು ಯಶವಂತರಾಯಗೌಡ ಪಾಟೀಲ್ ಈ ಹಿಂದೆ ಬಹಿರಂಗವಾಗಿ ಆರೋಪಿಸಿದ್ದರು. ಇದೀಗ ಬರ ವೀಕ್ಷಣೆಯ ಕಾರ್ಯಕ್ರಮದಿಂದ ದೂರ ಉಳಿದಿರುವುದು ಜಿಲ್ಲೆಯ ಕಾಂಗ್ರೆಸ್ ರಾಜಕೀಯದಲ್ಲಿ ಅಸಮಾಧಾನ ಇನ್ನೂ ಸಂಪೂರ್ಣವಾಗಿ ಶಮನವಾಗಿಲ್ಲ ಎಂಬ ಚರ್ಚೆಗೆ ಕಾರಣವಾಗಿದೆ.

ಮುಂದಿನ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲೆಯ ಇಬ್ಬರು ಪ್ರಮುಖ ನಾಯಕರ ನಡುವಿನ ಈ ಭಿನ್ನಾಭಿಪ್ರಾಯ ಕಾಂಗ್ರೆಸ್ ಸಂಘಟನೆಯ ಮೇಲೆ ಯಾವ ರೀತಿಯ ಪರಿಣಾಮ ಬೀರುತ್ತದೆ ಎಂಬುದು ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.

ಕನಸಿನಲ್ಲಿ ಶ್ರೀರಂಗನಾಥಸ್ವಾಮಿ ದರ್ಶನ: ₹66.78 ಲಕ್ಷದ ಚಿನ್ನದ ಕಲಶ ಅರ್ಪಿಸಿದ ಟಿವಿಎಸ್‌ ವೇಣು ಶ್ರೀನಿವಾಸನ್

0

ಮಂಡ್ಯ: ಕನಸಿನಲ್ಲಿ ಶ್ರೀರಂಗನಾಥಸ್ವಾಮಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಶ್ರೀರಂಗಪಟ್ಟಣದ ಶ್ರೀರಂಗನಾಥಸ್ವಾಮಿ ದೇವಾಲಯಕ್ಕೆ ಆಗಮಿಸಿದ ಟಿವಿಎಸ್‌ ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ವೇಣು ಶ್ರೀನಿವಾಸನ್ ಅವರು ₹66.78 ಲಕ್ಷ ಮೌಲ್ಯದ ಚಿನ್ನದ ಅಷ್ಟಲಕ್ಷ್ಮಿ ಕಲಶವನ್ನು ಸಮರ್ಪಿಸಿದ್ದಾರೆ.

398.580 ಗ್ರಾಂ ಶುದ್ಧ ಬಂಗಾರದಿಂದ ನಿರ್ಮಿಸಿರುವ ಕಲಶದ ಸುತ್ತಲೂ ಅಷ್ಟಲಕ್ಷ್ಮಿಯರ ಚಿತ್ರಗಳನ್ನು ಕೆತ್ತಲಾಗಿದೆ. ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಉಮಾ ಅವರಿಗೆ ಕಲಶ ಹಸ್ತಾಂತರಿಸಲಾಯಿತು.

ನಂತರ ಮಂಗಳವಾದ್ಯಗಳೊಂದಿಗೆ ರಾಯಗೋಪುರದಿಂದ ಗರ್ಭಗುಡಿಯವರೆಗೆ ಕಲಶವನ್ನು ಮೆರವಣಿಗೆಯಲ್ಲಿ ಕೊಂಡೊಯ್ಯಲಾಯಿತು. ಶ್ರೀರಂಗನಾಥಸ್ವಾಮಿ ಸನ್ನಿಧಿಯಲ್ಲಿ ಕಲಶವನ್ನಿರಿಸಿ ವಿಶೇಷ ಪೂಜೆ ನೆರವೇರಿಸಲಾಯಿತು. ಪ್ರಧಾನ ಅರ್ಚಕ ವಿಜಯಸಾರಥಿ ನೇತೃತ್ವದಲ್ಲಿ ಧಾರ್ಮಿಕ ವಿಧಿವಿಧಾನಗಳು ನಡೆದವು.

ಶ್ರೀರಂಗಪಟ್ಟಣದ ಈ ಪವಿತ್ರ ಕ್ಷೇತ್ರಕ್ಕೆ 27 ವರ್ಷಗಳ ಹಿಂದೆಯೇ ಬರಬೇಕೆಂಬ ಆಸೆ ಹೊಂದಿದ್ದೆ. ಆದರೆ ಅಂದು ಭೇಟಿ ಸಾಧ್ಯವಾಗಿರಲಿಲ್ಲ. ಇದೀಗ ಶ್ರೀರಂಗನಾಥಸ್ವಾಮಿ ಕನಸಿನಲ್ಲಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಇಲ್ಲಿಗೆ ಬಂದು ಸೇವೆ ಸಲ್ಲಿಸಿದ್ದೇನೆ ಎಂದು ವೇಣು ಶ್ರೀನಿವಾಸನ್ ಹೇಳಿದರು.

ಗದಗ| ಇಬ್ಬರು ಬಾಂಗ್ಲಾದೇಶಿ ನಿವಾಸಿಗಳ ಪತ್ತೆ: ಆಧಾರ್ ಪಶ್ಚಿಮ ಬಂಗಾಳದ್ದು, ಜನ್ಮಸ್ಥಳ ಬಾಂಗ್ಲಾದೇಶದ್ದು!

ಗದಗ: ತಾಲೂಕಿನ ಹರ್ತಿ ಗ್ರಾಮದ ಹೊರವಲಯದಲ್ಲಿ ನಿರ್ಮಾಣ ಹಂತದಲ್ಲಿರುವ ಅಲ್ಪಸಂಖ್ಯಾತ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಕಟ್ಟಡ ಕಾಮಗಾರಿ ಸ್ಥಳದಲ್ಲಿ ಅಕ್ರಮವಾಗಿ ಭಾರತದಲ್ಲಿ ನೆಲೆಸಿದ್ದರೆನ್ನಲಾದ ಇಬ್ಬರು ಬಾಂಗ್ಲಾದೇಶಿ ನಿವಾಸಿಗಳು ಪತ್ತೆಯಾಗಿದ್ದಾರೆ. ಕಳೆದ ಎರಡು ತಿಂಗಳಿಂದ ಕೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದ ಸಕೀಬ್ ಸಹೀನ್ (೨೬) ಹಾಗೂ ದಿಲಾವರ್ ಹುಸೇನ್ (೨೨) ಅವರನ್ನು ಗದಗ ಗ್ರಾಮೀಣ ಠಾಣೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಇಬ್ಬರೂ ಪಶ್ಚಿಮ ಬಂಗಾಳದಿಂದ ಬಂದಿದ್ದ ಕೂಲಿ ಕಾರ್ಮಿಕರ ತಂಡದೊಂದಿಗೆ ಗದಗ ಜಿಲ್ಲೆಗೆ ಆಗಮಿಸಿದ್ದರು ಎನ್ನಲಾಗಿದೆ. ಹರ್ತಿಯ ವಸತಿ ಶಾಲೆ ಕಟ್ಟಡ ಕಾಮಗಾರಿಯಲ್ಲಿ ಕಳೆದ ಎರಡು ತಿಂಗಳಿಂದ ಕೆಲಸ ಮಾಡುತ್ತಿದ್ದರು.

ಇವರ ಬಳಿ ಪಶ್ಚಿಮ ಬಂಗಾಳ ರಾಜ್ಯದ ವಿಳಾಸ ಹೊಂದಿರುವ ಆಧಾರ್ ಕಾರ್ಡ್ ಇತ್ತು. ಆದರೆ, ಜನ್ಮಸ್ಥಳ ಹಾಗೂ ಇತರೆ ದಾಖಲೆಗಳ ಪರಿಶೀಲನೆ ನಡೆಸಿದಾಗ ಇಬ್ಬರೂ ಬಾಂಗ್ಲಾದೇಶದ ನಿವಾಸಿಗಳು ಎಂಬುದು ಪೊಲೀಸರ ಗಮನಕ್ಕೆ ಬಂದಿದೆ. ಹೀಗಾಗಿ, ದಾಖಲೆಗಳ ಸತ್ಯಾಸತ್ಯತೆ ಹಾಗೂ ಇಬ್ಬರ ಹಿನ್ನೆಲೆ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಬೆಂಗಳೂರು, ಮಂಗಳೂರು, ಗಂಗಾವತಿಯಲ್ಲೂ ಕೆಲಸ!

ವಿಚಾರಣೆ ವೇಳೆ ಸಕೀಬ್ ಸಹೀನ್ ಹಾಗೂ ದಿಲಾವರ್ ಹುಸೇನ್ ಈ ಹಿಂದೆ ಬೆಂಗಳೂರು, ಮಂಗಳೂರು, ಗಂಗಾವತಿ ಸೇರಿದಂತೆ ವಿವಿಧೆಡೆ ಕೂಲಿ ಕೆಲಸ ಮಾಡಿದ್ದರೆನ್ನಲಾಗಿದೆ. ಭಾರತಕ್ಕೆ ಯಾವ ಮಾರ್ಗದಲ್ಲಿ ಪ್ರವೇಶಿಸಿದರು, ಎಲ್ಲೆಲ್ಲಿ ವಾಸವಾಗಿದ್ದರು, ಯಾರು ಇವರನ್ನು ಕೆಲಸಕ್ಕೆ ಕರೆತಂದರು ಎಂಬುದರ ಕುರಿತು ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಗದಗ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇಬ್ಬರ ದಾಖಲೆಗಳು ಹಾಗೂ ಹಿನ್ನೆಲೆಯನ್ನು ಪರಿಶೀಲಿಸಲಾಗುತ್ತಿದೆ.

ಈ ಕುರಿತು ಗದಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್ ಮಾತನಾಡಿ, ಹರ್ತಿ ಗ್ರಾಮದ ವಸತಿ ಶಾಲೆ ಕಟ್ಟಡ ಕಾಮಗಾರಿಯಲ್ಲಿ ಇಬ್ಬರು ಬಾಂಗ್ಲಾದೇಶಿ ನಿವಾಸಿಗಳು ಕಳೆದ ಎರಡು ತಿಂಗಳಿಂದ ಕೆಲಸ ಮಾಡುತ್ತಿದ್ದರು. ಅವರನ್ನು ವಶಕ್ಕೆ ಪಡೆದು ದಾಖಲೆಗಳು ಹಾಗೂ ಹಿನ್ನೆಲೆಯ ಕುರಿತು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಹರ್ತಿಯ ಕಟ್ಟಡ ಕಾಮಗಾರಿ ಸ್ಥಳದಲ್ಲಿ ಪತ್ತೆಯಾದ ಈ ಪ್ರಕರಣ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಪಶ್ಚಿಮ ಬಂಗಾಳದ ವಿಳಾಸದ ಆಧಾರ್ ಕಾರ್ಡ್ ಇವರ ಕೈಗೆ ಹೇಗೆ ಬಂತು? ಗದಗಕ್ಕೆ ಇವರನ್ನು ಕರೆತಂದವರು ಯಾರು? ಭಾರತಕ್ಕೆ ಯಾವ ಮಾರ್ಗದಲ್ಲಿ ಪ್ರವೇಶಿಸಿದ್ದರು? ಈ ಎಲ್ಲ ಪ್ರಶ್ನೆಗಳಿಗೆ ಪೊಲೀಸ್ ತನಿಖೆಯಿಂದ ಉತ್ತರ ಸಿಗಬೇಕಿದೆ.

ಬೆಂಗಳೂರಿನಿಂದ ಗೋವಾಕ್ಕೆ ತೆರಳುತ್ತಿದ್ದ ಬಸ್ ಪಲ್ಟಿ: ಮೂವರು ಸಾವು!

0

ಚಿತ್ರದುರ್ಗ: ಬೆಂಗಳೂರಿನಿಂದ ಗೋವಾಕ್ಕೆ ತೆರಳುತ್ತಿದ್ದ ಖಾಸಗಿ ಪ್ರವಾಸಿ ಬಸ್‌ವೊಂದು ರಾಷ್ಟ್ರೀಯ ಹೆದ್ದಾರಿಯಲ್ಲಿ ಪಲ್ಟಿಯಾಗಿ ದುರಂತ ಸಂಭವಿಸಿದೆ. ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಐಮಂಗಲ ಬಳಿ ನಡೆದ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಸುಮಾರು ೨೦ ಮಂದಿ ಗಾಯಗೊಂಡಿದ್ದಾರೆ.

ಐಮಂಗಲ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಬಸ್‌ ನಿಯಂತ್ರಣ ತಪ್ಪಿ ರಸ್ತೆಯ ಎಡಭಾಗದ ಕಂದಕಕ್ಕೆ ಉರುಳಿದೆ. ಬಸ್‌ನಲ್ಲಿದ್ದ ಒಟ್ಟು ೫೩ ಪ್ರಯಾಣಿಕರ ಪೈಕಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಅಪಘಾತದಲ್ಲಿ ಗಾಯಗೊಂಡ ಸುಮಾರು ೨೦ ಮಂದಿಯನ್ನು ಚಿಕಿತ್ಸೆಗಾಗಿ ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳ ಪೈಕಿ ಕೆಲವರ ಸ್ಥಿತಿ ಗಂಭೀರವಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಬೇಕಿದೆ.

ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಐಮಂಗಲ ಠಾಣೆ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದಾರೆ. ಘಟನೆಗೆ ನಿಖರ ಕಾರಣವೇನು ಎಂಬುದು ಪೊಲೀಸ್ ತನಿಖೆಯಿಂದ ತಿಳಿದುಬರಬೇಕಿದೆ. ಐಮಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ವಿದೇಶಿ ಟೆಸ್ಟ್ʼಗಳಲ್ಲಿ ಸಚಿನ್ʼಗಿಂತ ಕೊಹ್ಲಿಯೇ ಬೆಸ್ಟ್: ಕ್ರಿಕೆಟ್ ದಿಗ್ಗಜರ ಹೋಲಿಕೆಯಲ್ಲಿ ಡಿವಿಲಿಯರ್ಸ್ ಕೊಟ್ಟ ಕಾರಣವೇನು?

0

ಗಾಲೆ: ಶ್ರೀಲಂಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ 165 ರನ್‌ಗಳ ಭರ್ಜರಿ ಗೆಲುವು ದಾಖಲಿಸಿದ ಬೆನ್ನಲ್ಲೇ, ದಕ್ಷಿಣ ಆಫ್ರಿಕಾದ ಮಾಜಿ ನಾಯಕ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿ ವಿರಾಟ್ ಕೊಹ್ಲಿ ಜೊತೆ ಆಡಿದ್ದ ಎಬಿ ಡಿವಿಲಿಯರ್ಸ್ ನೀಡಿರುವ ಹೇಳಿಕೆ ಇದೀಗ ಭಾರಿ ಚರ್ಚೆಗೆ ಕಾರಣವಾಗಿದೆ.

ವಿದೇಶಿ ಟೆಸ್ಟ್‌ ಪಂದ್ಯಗಳ ಪ್ರದರ್ಶನವನ್ನು ಪರಿಗಣಿಸಿದರೆ ಸಚಿನ್ ತೆಂಡೂಲ್ಕರ್‌ಗಿಂತ ವಿರಾಟ್ ಕೊಹ್ಲಿಯೇ ಉತ್ತಮ ಬ್ಯಾಟರ್ ಎಂದು ಎಬಿ ಡಿವಿಲಿಯರ್ಸ್ ಅಭಿಪ್ರಾಯಪಟ್ಟಿದ್ದಾರೆ. ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ಮಾತನಾಡಿದ ಎಬಿಡಿ, ವಿದೇಶಿ ನೆಲದಲ್ಲಿ ಕೊಹ್ಲಿ ಭಾರತೀಯ ಬ್ಯಾಟಿಂಗ್‌ನ ಮಟ್ಟವನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ದಿದ್ದಾರೆ ಎಂದು ಮಾಜಿ ಸಹ ಆಟಗಾರನನ್ನು ಕೊಂಡಾಡಿದ್ದಾರೆ.

ವಿದೇಶದ ಬೌನ್ಸಿ ಪಿಚ್‌ಗಳಲ್ಲೂ ಏಷ್ಯಾದ ಬ್ಯಾಟರ್‌ಗಳು ಅತ್ಯುತ್ತಮವಾಗಿ ಆಡಬಲ್ಲರು ಎಂಬ ನಂಬಿಕೆಯನ್ನು ಮೊದಲು ಮೂಡಿಸಿದವರಲ್ಲಿ ಸಚಿನ್ ತೆಂಡೂಲ್ಕರ್ ಪ್ರಮುಖರು ಎಂದು ಡಿವಿಲಿಯರ್ಸ್ ಹೇಳಿದ್ದಾರೆ.

ಆದರೆ, ಸಚಿನ್ ಆರಂಭಿಸಿದ ಆ ದಾರಿಯನ್ನು ವಿರಾಟ್ ಕೊಹ್ಲಿ ಮುಂದಿನ ಹಂತಕ್ಕೆ ಕೊಂಡೊಯ್ದರು. ವಿದೇಶಿ ಟೆಸ್ಟ್ ಸರಣಿಗಳಲ್ಲಿ ಭಾರತವನ್ನು ಗೆಲುವಿನ ತಂಡವನ್ನಾಗಿ ರೂಪಿಸುವಲ್ಲಿ ಕೊಹ್ಲಿಯ ಬ್ಯಾಟಿಂಗ್ ಹಾಗೂ ನಾಯಕತ್ವ ಮಹತ್ವದ ಪಾತ್ರ ವಹಿಸಿದೆ ಎಂದು ಎಬಿಡಿ ಅಭಿಪ್ರಾಯಪಟ್ಟಿದ್ದಾರೆ. ಆದರೆ, ಸಚಿನ್ ಮತ್ತು ಕೊಹ್ಲಿಯ ವಿದೇಶಿ ಟೆಸ್ಟ್‌ ದಾಖಲೆಗಳನ್ನು ಅಂಕಿಅಂಶಗಳ ಆಧಾರದ ಮೇಲೆ ನೋಡಿದರೆ ಸಚಿನ್ ತೆಂಡೂಲ್ಕರ್ ಕೊಂಚ ಮುಂದಿದ್ದಾರೆ.

ಸಚಿನ್ ತೆಂಡೂಲ್ಕರ್ ತಮ್ಮ ವೃತ್ತಿಜೀವನದಲ್ಲಿ 200 ಟೆಸ್ಟ್ ಪಂದ್ಯಗಳಿಂದ 15,921 ರನ್ ಗಳಿಸಿದ್ದಾರೆ. ಅವರ ಒಟ್ಟು ರನ್‌ಗಳ ಪೈಕಿ ಬರೋಬ್ಬರಿ 8,705 ರನ್‌ಗಳು ವಿದೇಶಿ ನೆಲದಲ್ಲಿ ಬಂದಿವೆ. ಅಂದರೆ, ಸಚಿನ್ ಅವರ ಒಟ್ಟು ಟೆಸ್ಟ್ ರನ್‌ಗಳ ಶೇ.55ರಷ್ಟು ವಿದೇಶಿ ಪಿಚ್‌ಗಳಲ್ಲೇ ದಾಖಲಾಗಿದೆ. ಇನ್ನೊಂದೆಡೆ, ವಿರಾಟ್ ಕೊಹ್ಲಿ 123 ಟೆಸ್ಟ್‌ಗಳಿಂದ 9,230 ರನ್ ಗಳಿಸಿದ್ದಾರೆ. ವಿದೇಶಿ ನೆಲದಲ್ಲಿ ಆಡಿದ 66 ಟೆಸ್ಟ್ ಪಂದ್ಯಗಳಿಂದ ಕೊಹ್ಲಿ 4,774 ರನ್ ಗಳಿಸಿದ್ದಾರೆ.

ದಕ್ಷಿಣ ಆಫ್ರಿಕಾ, ಇಂಗ್ಲೆಂಡ್, ನ್ಯೂಜಿಲೆಂಡ್ ಮತ್ತು ಆಸ್ಟ್ರೇಲಿಯಾ ಒಳಗೊಂಡ SENA ದೇಶಗಳಲ್ಲಿನ ಪ್ರದರ್ಶನವನ್ನು ಪರಿಗಣಿಸಿದರೂ ಸಚಿನ್ ಕೊಹ್ಲಿಗಿಂತ ಮುಂದಿದ್ದಾರೆ. SENA ದೇಶಗಳ ವಿರುದ್ಧ ಸಚಿನ್ ತೆಂಡೂಲ್ಕರ್ 63 ಟೆಸ್ಟ್‌ಗಳಲ್ಲಿ 5,387 ರನ್ ಗಳಿಸಿದ್ದು, 17 ಶತಕ ಮತ್ತು 23 ಅರ್ಧಶತಕಗಳೊಂದಿಗೆ 51.30ರ ಸರಾಸರಿ ಹೊಂದಿದ್ದಾರೆ.

ವಿರಾಟ್ ಕೊಹ್ಲಿ SENA ದೇಶಗಳ ವಿರುದ್ಧ 46 ಟೆಸ್ಟ್‌ಗಳಲ್ಲಿ 3,661 ರನ್ ಗಳಿಸಿದ್ದು, 12 ಶತಕ ಮತ್ತು 14 ಅರ್ಧಶತಕಗಳೊಂದಿಗೆ 42.08ರ ಸರಾಸರಿ ಹೊಂದಿದ್ದಾರೆ. ಒಟ್ಟಾರೆ ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟರ್‌ಗಳ ಪಟ್ಟಿಯಲ್ಲಿ ಸಚಿನ್ ತೆಂಡೂಲ್ಕರ್ ಮೊದಲ ಸ್ಥಾನದಲ್ಲಿದ್ದರೆ, ಕಳೆದ ವರ್ಷ ಟೆಸ್ಟ್ ಕ್ರಿಕೆಟ್‌ಗೆ ವಿದಾಯ ಘೋಷಿಸಿರುವ ವಿರಾಟ್ ಕೊಹ್ಲಿ 19ನೇ ಸ್ಥಾನದಲ್ಲಿದ್ದಾರೆ.

ಆದರೆ, ಕೇವಲ ಅಂಕಿಅಂಶಗಳ ಆಧಾರದ ಮೇಲೆ ಸಚಿನ್ ಮತ್ತು ಕೊಹ್ಲಿಯನ್ನು ಹೋಲಿಸಬಾರದು ಎಂಬುದು ಎಬಿ ಡಿವಿಲಿಯರ್ಸ್ ಅವರ ವಾದ. ವಿದೇಶಿ ಟೆಸ್ಟ್ ಸರಣಿಗಳನ್ನು ಗೆಲ್ಲುವ ಸಾಮರ್ಥ್ಯವಿರುವ ತಂಡವಾಗಿ ಭಾರತವನ್ನು ರೂಪಿಸುವಲ್ಲಿ ಕೊಹ್ಲಿಯ ನಾಯಕತ್ವ ಮತ್ತು ಅವರ ಆಟದ ಪ್ರಭಾವ ದೊಡ್ಡದಾಗಿದೆ ಎಂದು ಅವರು ಹೇಳಿದ್ದಾರೆ.

ಸಚಿನ್ ಮತ್ತು ಕೊಹ್ಲಿ ನಿರ್ಮಿಸಿರುವ ಈ ಪರಂಪರೆ ಈಗಿನ ಭಾರತೀಯ ಬ್ಯಾಟರ್‌ಗಳಿಗೂ ನೆರವಾಗುತ್ತಿದೆ. ವಿಶೇಷವಾಗಿ ಕೆ.ಎಲ್. ರಾಹುಲ್ ಮತ್ತು ದೇವದತ್ ಪಡಿಕ್ಕಲ್ ಅವರಂತಹ ಆಟಗಾರರು ವಿದೇಶಿ ಪಿಚ್‌ಗಳಲ್ಲಿ ಉತ್ತಮ ಪ್ರದರ್ಶನ ನೀಡಲು ಈ ಹಿಂದಿನ ದಿಗ್ಗಜರ ಪ್ರಭಾವ ಸಹಕಾರಿಯಾಗಿದೆ ಎಂದು ಎಬಿಡಿ ಅಭಿಪ್ರಾಯಪಟ್ಟಿದ್ದಾರೆ.

ಕೆ.ಎಲ್. ರಾಹುಲ್ ತಾಂತ್ರಿಕವಾಗಿ ಅತ್ಯುತ್ತಮ ಬ್ಯಾಟರ್ ಆಗಿದ್ದು, ವಿದೇಶಿ ನೆಲದಲ್ಲಿ ದೊಡ್ಡ ಮೊತ್ತ ಕಲೆಹಾಕುವ ಸಾಮರ್ಥ್ಯ ಹೊಂದಿದ್ದಾರೆ. ಅವರು ಶತಕ ಗಳಿಸಿದ ಬಳಿಕ ಅಲ್ಲಿಗೇ ನಿಲ್ಲದೆ, ಅದನ್ನು 180 ರನ್‌ಗಳಂತಹ ದೊಡ್ಡ ಮೊತ್ತವಾಗಿ ಪರಿವರ್ತಿಸುವತ್ತ ಗಮನ ಹರಿಸಬೇಕು ಎಂದು ಡಿವಿಲಿಯರ್ಸ್ ಕಿವಿಮಾತು ಹೇಳಿದ್ದಾರೆ.

ಸಚಿನ್ ಮತ್ತು ಕೊಹ್ಲಿ ನಡುವಿನ ಹೋಲಿಕೆ ಕ್ರಿಕೆಟ್‌ನಲ್ಲಿ ಎಂದಿಗೂ ಮುಗಿಯದ ಚರ್ಚೆ. ಇದೀಗ ವಿದೇಶಿ ಟೆಸ್ಟ್‌ಗಳ ವಿಚಾರದಲ್ಲಿ ಕೊಹ್ಲಿಗೆ ಎಬಿಡಿ ನೀಡಿರುವ ಬೆಂಬಲ ಮತ್ತೊಮ್ಮೆ ಈ ಚರ್ಚೆಗೆ ಕಿಚ್ಚು ಹಚ್ಚಿದೆ.

ಯುವತಿಗೆ ಬ್ಲ್ಯಾಕ್ ಮೇಲ್ ಮಾಡಿ ಆತ್ಮಹತ್ಯೆಗೆ ಪ್ರಚೋದನೆ: ಆರೋಪಿಯ ಅರ್ಜಿ ವಜಾಗೊಳಿಸಿದ ಹೈಕೋರ್ಟ್

0

ಬೆಂಗಳೂರು: ಪ್ರೀತಿಯ ನಾಟಕವಾಡಿ, ಯುವತಿಯ ಮದುವೆಗೆ ನಿರಂತರವಾಗಿ ಅಡ್ಡಿಪಡಿಸಿ, ಬ್ಲ್ಯಾಕ್‌ಮೇಲ್ ಮಾಡುವ ಮೂಲಕ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪ ಎದುರಿಸುತ್ತಿರುವ ವ್ಯಕ್ತಿಯೊಬ್ಬನ ವಿರುದ್ಧದ ಕ್ರಿಮಿನಲ್ ಪ್ರಕರಣವನ್ನು ರದ್ದುಗೊಳಿಸಲು ಹೈಕೋರ್ಟ್ ನಿರಾಕರಿಸಿದೆ.

ಅರ್ಜಿದಾರರು ಪೂರ್ಣ ಪ್ರಮಾಣದ ವಿಚಾರಣೆ ಎದುರಿಸಿ ತಮ್ಮ ಮೇಲಿನ ಆರೋಪದಿಂದ ಮುಕ್ತರಾಗಬೇಕು ಎಂದು ನ್ಯಾಯಪೀಠ ಹೇಳಿದೆ. ತಮ್ಮ ವಿರುದ್ಧದ ಪ್ರಕರಣ ರದ್ದು ಕೋರಿ ಜೆ.ನವೀನ್ ಎಂಬವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠ ಈ ಆದೇಶ ನೀಡಿ, ಅರ್ಜಿ ವಜಾಗೊಳಿಸಿದೆ.

ಅರ್ಜಿದಾರರು ಮೃತ ಸಂತ್ರಸ್ತೆಗೆ ಲೈಂಗಿಕ ಕಿರುಕುಳ ನೀಡಿರುವುದು, ಪದೇ ಪದೆ ಹಿಂಬಾಲಿಸಿರುವುದು ಮತ್ತು ಖಾಸಗಿಯಾಗಿ ತೆಗೆದುಕೊಂಡ ಫೋಟೋಗಳನ್ನು ಬಹಿರಂಗಪಡಿಸುವುದಾಗಿ ಬೆದರಿಕೆ ಹಾಕಿದ್ದಾರೆ ಎಂಬುದು ತನಿಖೆಯಲ್ಲಿ ಗೊತ್ತಾಗಿದೆ ಎಂದು ಪೀಠ ಹೇಳಿದೆ. ಆಕೆಗೆ ಆಗಬಹುದಾದಂತಹ ವೈವಾಹಿಕ ಸಂಬಂಧಗಳನ್ನು ತಪ್ಪಿಸಿರುವುದು, ಭಾವಿ ಪತಿಯಾಗಬೇಕಾದವರಿಗೆ ಸಂತ್ರಸ್ತೆಯ ಬಗ್ಗೆ ಅಪಪ್ರಚಾರ ಮಾಡಿ ವಿವಾಹ ಸಂಬಂಧ ಬೆಳೆಯದಂತೆ ನೋಡಿಕೊಂಡಿದ್ದಾರೆ ಎಂಬ ಅಂಶಗಳೂ ಬಯಲಾಗಿವೆ ಎಂದು ಪೀಠ ತಿಳಿಸಿದೆ.

2025ರ ಜುಲೈ 5ರಂದು ಯುವತಿ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದರು ಎಂದೂ ಆ ಸಂದರ್ಭದಲ್ಲಿ ದೂರು ದಾಖಲಾಗಿ, ಹಿರಿಯರು ರಾಜಿ ಮಾಡಿಸಿ ಅದನ್ನು ಹಿಂಪಡೆದುಕೊಂಡಿದ್ದರು ಎಂದೂ ಪೀಠ ಉಲ್ಲೇಖಿಸಿದೆ. ಆದರೂ ಅರ್ಜಿದಾರ ತನ್ನ ಚಾಳಿ ಮುಂದುವರೆಸಿ, ಮದುವೆಗಳನ್ನು ಮುರಿಯುತ್ತಾ ಬಂದಿರುವುದು ತನಿಖೆಯಿಂದ ದೃಢಪಟ್ಟಿದೆ ಎಂದು ಪೀಠ ತಿಳಿಸಿದೆ.

ಆರೋಪಿ ಅರ್ಜಿದಾರ ಮೃತಳನ್ನು ಹಂತ-ಹಂತವಾಗಿ ಮೂಲೆಗುಂಪು ಮಾಡುವುದಕ್ಕೆ ಪ್ರಯತ್ನಿಸಿದ್ದಾರೆ, ಆಕೆಯ ಗೌಪ್ಯತೆಗೆ ಧಕ್ಕೆಯಾಗುವಂತೆ ಮಾಡಿದ್ದಾರೆ, ಕೆಲಸದ ಸ್ಥಳದಲ್ಲಿ ಕಿರುಕುಳ ನೀಡಿದ್ದಾರೆ, ಸ್ವತಂತ್ರವಾಗಿ ಜೀವನ ನಡೆಸಲು ಅವಕಾಶ ನೀಡಿಲ್ಲ ಎಂದ ನ್ಯಾಯಪೀಠ, ಈ ಎಲ್ಲ ಅಂಶಗಳು ಪ್ರಚೋದನೆಯ ಆರೋಪಗಳಾಗಿದ್ದು, ಸಾಬೀತಾಗಲು ಸಾಕ್ಷ್ಯಾಧಾರಗಳಿವೆ ಎಂದಿತು. ಇಬ್ಬರ ನಡುವಿನ ಘಟನೆ ಭಾವಾವೇಶದ ಕ್ಷಣಿಕ ಮಾತಿನ ಜಗಳವಲ್ಲ, ಬದಲಿಗೆ ನಿರಂತರವಾದ ಕಿರುಕುಳ, ಬ್ಲ್ಯಾಕ್‌ಮೇಲ್ ಮತ್ತು ಮಾನಸಿಕ ಹಿಂಸೆ ಮುಂದುವರೆದಿದೆ ಎಂದು ಪೀಠ ಹೇಳಿದೆ.

ಪ್ರಕರಣದ ಹಿನ್ನೆಲೆ: ಮೈಸೂರಿನಲ್ಲಿ ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದ ಸಂದರ್ಭದಲ್ಲಿ ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಆರೋಪಿ ನವೀನ್ ಪರಿಚಯವಾಗಿದ್ದ ಸಂತ್ರಸ್ತೆ ಭಾವನಾ (22). ಈ ಪರಿಚಯ ಕ್ರಮೇಣ ಬೆಳೆದು, ನವೀನ್ ತಾನು ಮದುವೆಯಾಗಿರುವುದನ್ನು ಮುಚ್ಚಿಟ್ಟು ಭಾವನಾ ಅವರನ್ನು ಬಲವಂತವಾಗಿ ಪ್ರೀತಿಸುವಂತೆ ಹಾಗೂ ಮದುವೆಯಾಗುವಂತೆ ಪೀಡಿಸಲು ಶುರು ಮಾಡಿದ್ದ ಎಂದೂ, ಆಕೆಯೊಂದಿಗೆ ತೆಗೆಸಿಕೊಂಡಿದ್ದ ಖಾಸಗಿ ಫೋಟೋಗಳನ್ನು ಇಟ್ಟುಕೊಂಡು ಬೆದರಿಕೆ ಹಾಕಿದ್ದ ಎಂದೂ ಆರೋಪಿಸಲಾಗಿದೆ.

ಭಾವನಾ ಅವರ ಮದುವೆ ನಿಶ್ಚಯವಾದಾಗಲೆಲ್ಲಾ ಆತ ಬಂದು ಭಾವಿ ಪತಿಯ ಬಳಿ ಸಂಬಂಧದ ಬಗ್ಗೆ ಹೇಳಿ ಮದುವೆ ಮುರಿಯುತ್ತಿದ್ದ. ಇದೇ ಕಾರಣದಿಂದ ನಿಶ್ಚಯವಾಗಿದ್ದ ಮದುವೆಯೂ ಮುರಿದುಹೋಗಿತ್ತು. ಈ ಬೆಳವಣಿಗೆಗಳ ಬಳಿಕ ಭಾವನಾ 2025ರ ಜುಲೈ 29ರಂದು ಮನೆಯಲ್ಲಿ ಮೃತಪಟ್ಟಿದ್ದರು. ಈ ಸಂಬಂಧ ಭಾವನಾ ತಾಯಿ ನೆಲಮಂಗಲ ಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ದೂರಿನ ಸಂಬಂಧ ಪೊಲೀಸರು ತನಿಖೆ ನಡೆಸಿ ದೋಷಾರೋಪಪಟ್ಟಿಯನ್ನು ವಿಚಾರಣಾ ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಪ್ರಕರಣದಿಂದ ಬಿಡುಗಡೆ ಕೋರಿ ನವೀನ್ ಹೈಕೋರ್ಟ್ ಮೆಟ್ಟಿಲೇರಿದ್ದ. ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಪ್ರಚೋದನೆ ನೀಡುವಂತಹ ನೇರ ಅಂಶಗಳಿಲ್ಲ, ಮೃತರ ಸಾವಿಗೂ ಅರ್ಜಿದಾರರಿಗೂ ನೇರ ಸಂಬಂಧವಿಲ್ಲ ಎಂದು ವಾದಿಸಿ ಅರ್ಜಿ ವಜಾಗೊಳಿಸಬೇಕು ಎಂದು ಕೋರಿದ್ದರು.