Home Blog

ಕಸ ನಿರ್ವಹಣೆಯಲ್ಲಿ ಎಡವಿದ ನಗರಸಭೆ

0

ವಿಜಯಸಾಕ್ಷಿ ಸುದ್ದಿ, ಗದಗ: ನಗರದ ಬಳಗಾನೂರ ರಸ್ತೆಯಲ್ಲಿರುವ ಘನ ತ್ಯಾಜ್ಯ (ಕಸ) ನಿರ್ವಹಣಾ ಕೇಂದ್ರಕ್ಕೆ ಗುರುವಾರ ದಿಢೀರ್ ಭೇಟಿ ನೀಡಿದ ಕರ್ನಾಟಕ ಉಪಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ಅವರು, ಕಸ ನಿರ್ವಹಣೆಯಲ್ಲಿನ ಅವ್ಯವಸ್ಥೆ ಕಂಡು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡು, ವೈಜ್ಞಾನಿಕ ಹಾಗೂ ಕಾನೂನುಬದ್ಧ ರೀತಿಯಲ್ಲಿ ತ್ಯಾಜ್ಯ ನಿರ್ವಹಣೆ ನಡೆಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಕೇಂದ್ರದಲ್ಲಿ ಕಸ ಸಂಗ್ರಹ, ವಿಂಗಡಣೆ ಹಾಗೂ ವಿಲೇವಾರಿ ವ್ಯವಸ್ಥೆಯನ್ನು ಪರಿಶೀಲಿಸಿದ ಅವರು, ನಗರದ ಸ್ವಚ್ಛತೆಗೆ ಮೊದಲ ಆದ್ಯತೆ ನೀಡಬೇಕು. ಮನೆಮನೆಗಳಿಂದ ಸಂಗ್ರಹವಾಗುವ ಕಸವನ್ನು ಸಮರ್ಪಕವಾಗಿ ವಿಂಗಡಿಸಿ ವೈಜ್ಞಾನಿಕ ರೀತಿಯಲ್ಲಿ ವಿಲೇವಾರಿ ಮಾಡುವ ವ್ಯವಸ್ಥೆಯನ್ನು ಕಡ್ಡಾಯವಾಗಿ ಜಾರಿಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಕಸ ನಿರ್ವಹಣೆಯಲ್ಲಿರುವ ಲೋಪದೋಷಗಳನ್ನು ತಕ್ಷಣ ಸರಿಪಡಿಸಿ, ಸುಧಾರಿತ ವ್ಯವಸ್ಥೆ ರೂಪಿಸಬೇಕು. ಉತ್ತಮ ತ್ಯಾಜ್ಯ ನಿರ್ವಹಣಾ ಪದ್ಧತಿಗಳನ್ನು ಅಳವಡಿಸಿಕೊಳ್ಳಲು ನಗರಸಭೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ಮೈಸೂರಿಗೆ ಕಳುಹಿಸಿ ತರಬೇತಿ ನೀಡಬೇಕು. ಅಲ್ಲಿನ ಯಶಸ್ವಿ ಮಾದರಿಯನ್ನು ಅಧ್ಯಯನ ಮಾಡಿ ಗದಗದಲ್ಲೂ ಅನುಷ್ಠಾನಗೊಳಿಸುವಂತೆ ನಿರ್ದೇಶಿಸಿದರು.

ಕಸ ವಿಲೇವಾರಿ ಕೇಂದ್ರದ ಸುತ್ತಮುತ್ತ ಹೊಸ ಬಡಾವಣೆಗಳಿಗೆ ಅವಕಾಶ ನೀಡಬಾರದು. ದುರ್ವಾಸನೆ, ಧೂಳು ಹಾಗೂ ಇತರ ತೊಂದರೆಗಳಿಂದ ರೈತರು, ಸಾರ್ವಜನಿಕರು ಮತ್ತು ರಸ್ತೆ ಸಂಚಾರಿಗಳಿಗೆ ಯಾವುದೇ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ಕೇಂದ್ರದಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಗುಣಮಟ್ಟದ ಮಾಸ್ಕ್, ಬೂಟ್, ಕೈಗವಸು ಸೇರಿದಂತೆ ಅಗತ್ಯ ಸುರಕ್ಷತಾ ಸಾಮಗ್ರಿಗಳನ್ನು ಕಡ್ಡಾಯವಾಗಿ ಒದಗಿಸಬೇಕು. ಅವರ ಆರೋಗ್ಯ ತಪಾಸಣೆ ಹಾಗೂ ಆರೋಗ್ಯ ರಕ್ಷಣೆಗೆ ಕೈಗೊಂಡಿರುವ ಕ್ರಮಗಳ ಕುರಿತು ಮಾಹಿತಿ ಪಡೆದು, ಇನ್ನಷ್ಟು ಪರಿಣಾಮಕಾರಿ ವ್ಯವಸ್ಥೆ ರೂಪಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಪರಿಶೀಲನೆ ವೇಳೆ ಕಳೆದ ಆರು ವರ್ಷಗಳಿಂದ ಕಸ ವಿಲೇವಾರಿ ಯಂತ್ರ ಕೆಟ್ಟು ನಿಂತಿರುವುದು ಗಮನಕ್ಕೆ ಬಂದ ಹಿನ್ನೆಲೆಯಲ್ಲಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಉಪಲೋಕಾಯುಕ್ತರು, ಇಷ್ಟು ವರ್ಷಗಳಾದರೂ ಯಂತ್ರ ದುರಸ್ತಿಗೊಳಿಸದಿರುವ ಬಗ್ಗೆ ಅಧಿಕಾರಿಗಳನ್ನು ಪ್ರಶ್ನಿಸಿದರು. ತಕ್ಷಣವೇ ಆಧುನಿಕ ತಂತ್ರಜ್ಞಾನ ಹೊಂದಿರುವ ಹೊಸ ಯಂತ್ರ ಖರೀದಿಸಿ ಕಾರ್ಯಾರಂಭ ಮಾಡುವಂತೆ ಸೂಚನೆ ನೀಡಿದರು.

ಕಸ ನಿರ್ವಹಣೆ ಸಂಪೂರ್ಣವಾಗಿ ಪರಿಸರ ಸ್ನೇಹಿ ಹಾಗೂ ಕಾನೂನುಬದ್ಧ ರೀತಿಯಲ್ಲಿ ನಡೆಯಬೇಕು. ಸಾರ್ವಜನಿಕ ಆರೋಗ್ಯ ಮತ್ತು ಪರಿಸರ ಸಂರಕ್ಷಣೆಗೆ ಯಾವುದೇ ಧಕ್ಕೆಯಾಗದಂತೆ ವ್ಯವಸ್ಥೆ ರೂಪಿಸುವುದು ನಗರಸಭೆಯ ಜವಾಬ್ದಾರಿಯಾಗಿದೆ ಎಂದು ಹೇಳಿದರು.

ಪರಿಶೀಲನೆ ವೇಳೆ ಹಿರಿಯ ನ್ಯಾಯಾಧೀಶರು ಹಾಗೂ ಆಪ್ತ ಕಾರ್ಯದರ್ಶಿ ಕಿರಣ್ ಪಿ.ಎಂ. ಪಾಟೀಲ, ಸುನೀಲಕುಮಾರ ಆರ್. ಉಪಸ್ಥಿತರಿದ್ದರು.

ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿ.ಎಸ್. ಶಿವನಗೌಡರ, ಉಪವಿಭಾಗಾಧಿಕಾರಿ ಗಂಗಪ್ಪ ಎಂ., ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಸಿದ್ದಲಿಂಗಪ್ಪ, ಉಪಾಧೀಕ್ಷಕ ಲೋಕೆಶ್, ಡಿಯುಡಿಸಿ ಯೋಜನಾ ನಿರ್ದೇಶಕ ಬಸನಗೌಡ ಕೊಟೂರ, ಪರಿಸರ ಅಭಿಯಂತರ ಆನಂದ ಬದಿ, ನಗರಸಭೆ ಆಯುಕ್ತ ರಾಜಾರಾಮ ಪವಾರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

“ಕಸ ನಿರ್ವಹಣೆ ನಿರ್ಲಕ್ಷ್ಯದ ವಿಷಯವಲ್ಲ. ವೈಜ್ಞಾನಿಕ ಹಾಗೂ ಪರಿಸರ ಸ್ನೇಹಿ ವ್ಯವಸ್ಥೆ ಜಾರಿಯಾಗಬೇಕು. ಸಾರ್ವಜನಿಕ ಆರೋಗ್ಯಕ್ಕೆ ಧಕ್ಕೆ ಉಂಟುಮಾಡುವ ಯಾವುದೇ ಲೋಪ ಸಹಿಸಲಾಗುವುದಿಲ್ಲ.”
– ನ್ಯಾ. ಕೆ.ಎನ್. ಫಣೀಂದ್ರ, ಕರ್ನಾಟಕ ಉಪಲೋಕಾಯುಕ್ತ

ಮೋದಿ ವಿದೇಶ ಪ್ರವಾಸದ ಲೆಕ್ಕ ಕೊಟ್ಟ ಕೇಂದ್ರ: 23 ದೇಶಗಳ ಭೇಟಿಗೆ ₹180 ಕೋಟಿ ಖರ್ಚು!

0

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು 2025ರಲ್ಲಿ ಕೈಗೊಂಡ 23 ದೇಶಗಳ ವಿದೇಶ ಪ್ರವಾಸಗಳಿಗೆ ಒಟ್ಟು ಸುಮಾರು ₹180 ಕೋಟಿ ವೆಚ್ಚವಾಗಿದೆ ಎಂದು ಕೇಂದ್ರ ಸರ್ಕಾರ ರಾಜ್ಯಸಭೆಗೆ ಮಾಹಿತಿ ನೀಡಿದೆ.

ರಾಜ್ಯಸಭಾ ಸಂಸದರಾದ ಸಂಜಯ್ ಸಿಂಗ್ ಹಾಗೂ ಡಾ. ವಿ. ಶಿವದಾಸನ್ ಅವರು ಕೇಳಿದ ಪ್ರಶ್ನೆಗೆ ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ಪಬಿತ್ರ ಮಾರ್ಗರೆಟಾ ಅವರು ಲಿಖಿತ ಉತ್ತರ ನೀಡಿದ್ದು, ಪ್ರಧಾನಿ ಅವರ ವಿದೇಶ ಪ್ರವಾಸಗಳ ವೆಚ್ಚದ ವಿವರಗಳನ್ನು ಬಹಿರಂಗಪಡಿಸಿದ್ದಾರೆ.

2021ರಿಂದ ಪ್ರಧಾನಿ ಕೈಗೊಂಡ ವಿದೇಶ ಪ್ರವಾಸಗಳು, ಪ್ರತಿ ಪ್ರವಾಸದ ವೆಚ್ಚ, ದ್ವಿಪಕ್ಷೀಯ ಒಪ್ಪಂದಗಳು ಹಾಗೂ ವಿದೇಶಿ ನೇರ ಬಂಡವಾಳ ಹೂಡಿಕೆ (FDI) ಕುರಿತು ಸಂಸದರು ಮಾಹಿತಿ ಕೇಳಿದ್ದರು.

ಕೇಂದ್ರ ಸರ್ಕಾರದ ಮಾಹಿತಿಯಂತೆ, 2026ರಲ್ಲಿ ಇಲ್ಲಿಯವರೆಗೆ ಪ್ರಧಾನಿ ಅವರ ವಿದೇಶ ಪ್ರವಾಸಗಳಿಗೆ ₹74.58 ಕೋಟಿ ವೆಚ್ಚವಾಗಿದೆ. ಇದರಲ್ಲಿ ಜುಲೈ 6ರಿಂದ ಜುಲೈ 11ರವರೆಗೆ ಇಂಡೋನೇಷ್ಯಾ, ಆಸ್ಟ್ರೇಲಿಯಾ ಹಾಗೂ ನ್ಯೂಜಿಲ್ಯಾಂಡ್‌ಗೆ ಕೈಗೊಂಡ ಪ್ರವಾಸವೂ ಸೇರಿದೆ.

ಪ್ರಧಾನಿ ಮೋದಿ ಅವರು 2025ರಲ್ಲಿ ಅಮೆರಿಕ, ಬ್ರಿಟನ್, ಫ್ರಾನ್ಸ್, ಚೀನಾ, ಜಪಾನ್ ಸೇರಿದಂತೆ ಹಲವು ದೇಶಗಳಿಗೆ ಭೇಟಿ ನೀಡಿದ್ದರು ಎಂದು ಸರ್ಕಾರ ತಿಳಿಸಿದೆ.

 

ಮಾತಲ್ಲ… ಕಾರ್ಯದಲ್ಲೇ ಗುರುತಾದ ಡಾ. ನಾಗಲಕ್ಷ್ಮಿ ಚೌಧರಿ

ಮಾಜದಲ್ಲಿ ಕೆಲವರು ಕೇವಲ ಹುದ್ದೆಯಿಂದ ಗುರುತಿಸಿಕೊಳ್ಳುತ್ತಾರೆ. ಆದರೆ ಕೆಲವರು ತಮ್ಮ ಸೇವೆ, ಸರಳತೆ ಮತ್ತು ಸಮಾಜಮುಖಿ ಕಾರ್ಯಗಳ ಮೂಲಕ ಹುದ್ದೆಗೇ ಗೌರವ ತಂದುಕೊಡುತ್ತಾರೆ. ಅಂತಹ ಅಪರೂಪದ ವ್ಯಕ್ತಿತ್ವಗಳಲ್ಲಿ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಅವರು ಪ್ರಮುಖರು.

ವೈದ್ಯೆಯಾಗಿಯೂ, ಸಮಾಜಸೇವಕಿಯಾಗಿಯೂ, ಮಹಿಳಾ ಹೋರಾಟಗಾರ್ತಿಯಾಗಿಯೂ ಗುರುತಿಸಿಕೊಂಡಿರುವ ಅವರು, ತಮ್ಮ ಮಾತಿಗಿಂತ ಕಾರ್ಯಗಳ ಮೂಲಕವೇ ಜನರ ಮನಸ್ಸು ಗೆದ್ದಿದ್ದಾರೆ. ಯಾವುದೇ ಜವಾಬ್ದಾರಿ ವಹಿಸಿಕೊಂಡರೂ ಅದನ್ನು ಜನಸೇವೆಯ ಅವಕಾಶವೆಂದು ಪರಿಗಣಿಸುವ ಅವರ ಕಾರ್ಯವೈಖರಿ ಎಲ್ಲರಿಗೂ ಮಾದರಿಯಾಗಿದೆ.

ತಂದೆಯ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡಿರುವ ಡಾ. ನಾಗಲಕ್ಷ್ಮಿ ಚೌಧರಿ ಅವರು ಇಂದು ರಾಜ್ಯದ ಸಾವಿರಾರು ಮಹಿಳೆಯರ ವಿಶ್ವಾಸದ ಧ್ವನಿಯಾಗಿ ಹೊರಹೊಮ್ಮಿದ್ದಾರೆ. ಗ್ರಾಮೀಣ ಭಾಗದಲ್ಲಿಯೂ ನ್ಯಾಯ, ಸಮಾನತೆ ಮತ್ತು ಮಾನವೀಯತೆಯ ಮೌಲ್ಯಗಳನ್ನು ಬೆಳೆಸಿದ ತಮ್ಮ ತಂದೆಯ ಹಾದಿಯಲ್ಲಿಯೇ ಅವರು ಸಾಗುತ್ತಿರುವುದು ಗಮನಾರ್ಹ.

ವೈದ್ಯಕೀಯ ವೃತ್ತಿಯಲ್ಲಿ ಸೇವೆ ಸಲ್ಲಿಸಿದ ನಂತರ ಸಾರ್ವಜನಿಕ ಜೀವನಕ್ಕೆ ಕಾಲಿಟ್ಟ ಅವರು, ಮಹಿಳಾ ಆಯೋಗದ ಅಧ್ಯಕ್ಷೆಯಾಗಿ ಮಹಿಳೆಯರ ಸುರಕ್ಷತೆ, ಆರೋಗ್ಯ, ಕಾನೂನು ಅರಿವು, ಮಹಿಳಾ ದೌರ್ಜನ್ಯ ತಡೆ ಹಾಗೂ ಸಂತ್ರಸ್ತರಿಗೆ ನ್ಯಾಯ ಒದಗಿಸುವ ಕಾರ್ಯಗಳಲ್ಲಿ ನಿರಂತರವಾಗಿ ತೊಡಗಿಸಿಕೊಂಡಿದ್ದಾರೆ.

ರಾಜ್ಯದ ವಿವಿಧ ಜಿಲ್ಲೆಗಳಿಗೆ ಭೇಟಿ ನೀಡಿ, ಮಹಿಳೆಯರ ಅಹವಾಲುಗಳನ್ನು ಆಲಿಸುವುದು, ಸಮಸ್ಯೆಗಳನ್ನು ಸ್ಥಳದಲ್ಲಿಯೇ ಪರಿಶೀಲಿಸುವುದು ಹಾಗೂ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ನಿರ್ದೇಶನ ನೀಡುವುದು ಅವರ ಕಾರ್ಯಶೈಲಿಯ ವಿಶೇಷತೆ. ಹೀಗಾಗಿ ಅನೇಕ ಮಹಿಳೆಯರಿಗೆ ಅವರು ಧೈರ್ಯದ ಪ್ರತೀಕವಾಗಿದ್ದಾರೆ.

ಶಾಲೆ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸುವ ಅವರು, ಜೀವನದಲ್ಲಿ ಗುರಿಯ ಮಹತ್ವ, ಶಿಕ್ಷಣದ ಮೌಲ್ಯ, ಮಹಿಳೆಯರ ಆತ್ಮರಕ್ಷಣೆ, ಆತ್ಮವಿಶ್ವಾಸ ಹಾಗೂ ಕಾನೂನು ಅರಿವಿನ ಬಗ್ಗೆ ನೀಡುವ ಸಂದೇಶಗಳು ಯುವಜನತೆಗೆ ಹೊಸ ಚೈತನ್ಯ ತುಂಬುತ್ತವೆ. ಅವರ ಮಾತುಗಳಲ್ಲಿ ಒಬ್ಬ ಅಧಿಕಾರಿಯ ಕಠಿಣತೆಗಿಂತ, ಒಬ್ಬ ತಾಯಿಯ ಕಾಳಜಿ ಹೆಚ್ಚಾಗಿ ಕಾಣಿಸುತ್ತದೆ.

ಇಂದಿನ ಸಮಾಜದಲ್ಲಿ ಮತ್ತೊಬ್ಬರ ನೋವಿಗೆ ಸ್ಪಂದಿಸುವ ಮನಸ್ಸುಳ್ಳ ವ್ಯಕ್ತಿಗಳು ವಿರಳವಾಗುತ್ತಿರುವ ಸಂದರ್ಭದಲ್ಲಿ, ಅನಾಥರು, ಬಡವರು ಹಾಗೂ ಸಂಕಷ್ಟದಲ್ಲಿರುವ ಮಹಿಳೆಯರಿಗೆ ಆಸರೆಯಾಗುತ್ತಿರುವ ಡಾ. ನಾಗಲಕ್ಷ್ಮಿ ಚೌಧರಿ ಅವರಂತಹ ವ್ಯಕ್ತಿತ್ವಗಳು ಸಮಾಜಕ್ಕೆ ಅತ್ಯಗತ್ಯ. ರಾಜಕೀಯ ಮತ್ತು ಆಡಳಿತ ವ್ಯವಸ್ಥೆಯಲ್ಲಿ ಇಂತಹ ಸೇವಾ ಮನೋಭಾವದ ನಾಯಕತ್ವ ಹೆಚ್ಚಾದರೆ ಸಮಾಜ ಇನ್ನಷ್ಟು ಸುಂದರವಾಗಲಿದೆ.

ಯುವಜನತೆ ಕೇವಲ ಯಶಸ್ಸಿನ ಹಿಂದೆ ಓಡುವುದಕ್ಕಿಂತ ಸಮಾಜದ ಬಗ್ಗೆ ಕಾಳಜಿ ಹೊಂದಿದ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಬೇಕು ಎಂಬ ಸಂದೇಶವನ್ನು ಅವರ ಬದುಕು ಸಾರುತ್ತದೆ. ಸೇವೆ, ಪ್ರಾಮಾಣಿಕತೆ ಮತ್ತು ಮಾನವೀಯತೆಯ ಮೂಲಕವೂ ಯಶಸ್ಸು ಸಾಧಿಸಬಹುದು ಎಂಬುದನ್ನು ಅವರು ತಮ್ಮ ಬದುಕಿನ ಮೂಲಕ ತೋರಿಸಿಕೊಟ್ಟಿದ್ದಾರೆ.

ಡಾ. ನಾಗಲಕ್ಷ್ಮಿ ಚೌಧರಿ ಅವರು ಇನ್ನಷ್ಟು ಆರೋಗ್ಯದಿಂದ, ಉತ್ಸಾಹದಿಂದ ರಾಜ್ಯದ ಮಹಿಳೆಯರ ಹಾಗೂ ಸಮಾಜದ ಒಳಿತಿಗಾಗಿ ಕಾರ್ಯನಿರ್ವಹಿಸಲಿ. ಅವರ ಸೇವಾ ಪಯಣ ಇನ್ನಷ್ಟು ಯಶಸ್ವಿಯಾಗಲಿ. ಅವರ ಆದರ್ಶಗಳು ಯುವಜನತೆಗೆ ಸ್ಫೂರ್ತಿಯಾಗಿ, ಸಮಾಜದಲ್ಲಿ ಇನ್ನಷ್ಟು ಸೇವಾ ಮನೋಭಾವದ ವ್ಯಕ್ತಿತ್ವಗಳು ರೂಪುಗೊಳ್ಳಲಿ ಎಂಬುದು ನನ್ನ ಹಾರೈಕೆ.

  • ಮೇಘನಾ ಎಸ್. ಮುದ್ದಿ
    ವಿದ್ಯಾರ್ಥಿನಿ,
    ಶ್ರೀಮತಿ ಎಂ.ಬಿ. ಹುಯಿಲಗೋಳ ಬಿ.ಎಡ್. ಶಿಕ್ಷಣ ಮಹಾವಿದ್ಯಾಲಯ, ಗದಗ

ಗಣೇಶೋತ್ಸವಕ್ಕೆ PoP ಗಣೇಶ ಮೂರ್ತಿಗಳಿಗೆ ಬ್ರೇಕ್: ಮಣ್ಣಿನ ಗಣಪತಿಗೆ ಮಾತ್ರ ಅವಕಾಶ ನೀಡುವಂತೆ ಈಶ್ವರ ಖಂಡ್ರೆ ಸೂಚನೆ

ಬೆಂಗಳೂರು: ಸೆಪ್ಟೆಂಬರ್ 14ರಂದು ರಾಜ್ಯಾದ್ಯಂತ ಆಚರಿಸಲಿರುವ ಗಣೇಶೋತ್ಸವದ ಹಿನ್ನೆಲೆಯಲ್ಲಿ ನಿಷೇಧಿತ ಪ್ಲಾಸ್ಟರ್ ಆಫ್ ಪ್ಯಾರಿಸ್ (PoP) ಹಾಗೂ ರಾಸಾಯನಿಕ ಬಣ್ಣ ಬಳಸಿ ತಯಾರಿಸಲಾದ ಗಣೇಶ ಮೂರ್ತಿಗಳ ತಯಾರಿಕೆ, ಸಾಗಾಟ, ಮಾರಾಟ ಮತ್ತು ವಿಸರ್ಜನೆಗೆ ಅವಕಾಶ ನೀಡದಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ. ಖಂಡ್ರೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಈ ಸಂಬಂಧ ಇಲಾಖೆಯ ಕಾರ್ಯದರ್ಶಿಗೆ ಲಿಖಿತ ನಿರ್ದೇಶನ ನೀಡಿರುವ ಸಚಿವರು, ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಪರಿಸರ ಸ್ನೇಹಿ, ಬಣ್ಣರಹಿತ ಮಣ್ಣಿನ ಗೌರಿ-ಗಣೇಶ ಮೂರ್ತಿಗಳ ಪೂಜೆ ಮತ್ತು ವಿಸರ್ಜನೆಗೆ ಮಾತ್ರ ಅವಕಾಶ ಕಲ್ಪಿಸುವಂತೆ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.

ಗಣೇಶನು ಮಣ್ಣಿನಿಂದ ರೂಪುಗೊಳ್ಳುವ ದೇವರಾಗಿರುವುದರಿಂದ ಪರಿಸರ ಹಾಗೂ ಜಲಮೂಲಗಳ ಸಂರಕ್ಷಣೆ ದೃಷ್ಟಿಯಿಂದ ಮಣ್ಣಿನ ಗಣೇಶ ಮೂರ್ತಿಗಳ ಬಳಕೆಯನ್ನು ಉತ್ತೇಜಿಸಬೇಕು ಎಂದು ಅವರು ತಿಳಿಸಿದ್ದಾರೆ.

ಗಣೇಶೋತ್ಸವದ ವೇಳೆ ಯಾವುದೇ ಸಮುದಾಯದ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗದಂತೆ ಈಗಿನಿಂದಲೇ ಪಿಒಪಿ ಗಣೇಶ ಮೂರ್ತಿಗಳ ತಯಾರಿಕೆ, ದಾಸ್ತಾನು, ಸಾಗಾಟ ಮತ್ತು ಮಾರಾಟಕ್ಕೆ ಕಡಿವಾಣ ಹಾಕಲು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಸಹಕಾರ ಪಡೆಯುವಂತೆ ಸೂಚಿಸಲಾಗಿದೆ. ಜೊತೆಗೆ ಪಂಚಾಯಿತಿ ಮಟ್ಟದಲ್ಲಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಅಭಿಯಾನವನ್ನೂ ಕೈಗೊಳ್ಳುವಂತೆ ಆದೇಶಿಸಲಾಗಿದೆ.

ಸಚಿವ ಈಶ್ವರ ಖಂಡ್ರೆ ಅವರ ಪ್ರಕಾರ, ಪಿಒಪಿ ಮೂರ್ತಿಗಳು ಕ್ಯಾಲ್ಷಿಯಂ ಸಲ್ಫೇಟ್ ಹೆಮಿಹೈಡ್ರೇಟ್‌ನಿಂದ ತಯಾರಾಗುತ್ತವೆ. ಇವುಗಳಲ್ಲಿ ಗಂಧಕ, ರಂಜಕ, ಜಿಪ್ಸಮ್, ಮ್ಯಾಗ್ನೀಷಿಯಂ ಸೇರಿದಂತೆ ಹಲವು ಅಪಾಯಕಾರಿ ಅಂಶಗಳಿದ್ದು, ಪಾದರಸ, ಕ್ಯಾಡ್ಮಿಯಂ, ಸೀಸ ಹಾಗೂ ಇತರ ರಾಸಾಯನಿಕ ಬಣ್ಣಗಳ ಬಳಕೆಯಿಂದ ಪರಿಸರಕ್ಕೆ ಗಂಭೀರ ಹಾನಿ ಉಂಟಾಗುತ್ತದೆ.

ಇಂತಹ ಮೂರ್ತಿಗಳನ್ನು ಕೆರೆ, ನದಿ, ಬಾವಿ ಸೇರಿದಂತೆ ಜಲಮೂಲಗಳಲ್ಲಿ ವಿಸರ್ಜಿಸಿದರೆ ಭಾರ ಲೋಹಗಳು ನೀರಿನಲ್ಲಿ ಕರಗಿ ಜಲಮಾಲಿನ್ಯ ಉಂಟುಮಾಡುವುದಲ್ಲದೆ, ಜಲಚರಗಳ ಸಾವಿಗೆ ಹಾಗೂ ಜನ-ಜಾನುವಾರುಗಳ ಆರೋಗ್ಯದ ಮೇಲೂ ದುಷ್ಪರಿಣಾಮ ಬೀರುತ್ತವೆ ಎಂದು ಅವರು ಎಚ್ಚರಿಸಿದ್ದಾರೆ.

ಜಲ ಮಾಲಿನ್ಯ (ತಡೆ ಮತ್ತು ನಿಯಂತ್ರಣ) ಕಾಯ್ದೆ-1974ರ ಕಲಂ 33(ಎ) ಅನ್ವಯ ರಾಜ್ಯದ ಯಾವುದೇ ನದಿ, ಕೆರೆ, ಸರೋವರ, ಕಟ್ಟೆ, ಬಾವಿ ಸೇರಿದಂತೆ ಜಲಮೂಲಗಳಲ್ಲಿ ಪಿಒಪಿ ಮೂರ್ತಿಗಳ ವಿಸರ್ಜನೆ ನಿಷೇಧಿಸಲಾಗಿದೆ ಎಂಬುದನ್ನೂ ಸಚಿವರು ನೆನಪಿಸಿದ್ದಾರೆ.

ಪರಿಸರಕ್ಕೆ ಹಾನಿಕಾರಕವಾದ ಪಿಒಪಿ ಮೂರ್ತಿಗಳ ತಯಾರಿಕೆ, ಸಾಗಾಟ, ಮಾರಾಟ ಹಾಗೂ ವಿಸರ್ಜನೆಯನ್ನು ನಿಷೇಧಿಸಿ 2023ರ ಸೆಪ್ಟೆಂಬರ್ 15ರಂದು ಸರ್ಕಾರ ಆದೇಶ ಹೊರಡಿಸಿದ್ದು, ಆ ಆದೇಶವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಹೈಕೋರ್ಟ್ ಕೂಡ ನಿರ್ದೇಶನ ನೀಡಿದೆ. ಈ ಹಿನ್ನೆಲೆಯಲ್ಲಿ ಎಲ್ಲ ಗ್ರಾಮ ಪಂಚಾಯಿತಿಗಳು ಪರಿಸರ ಮತ್ತು ಜಲಮೂಲಗಳ ರಕ್ಷಣೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಈಶ್ವರ ಖಂಡ್ರೆ ಸ್ಪಷ್ಟ ಸೂಚನೆ ನೀಡಿದ್ದಾರೆ.

ಆಡಿಯೋ ಇದ್ದರೆ ದೂರು ಕೊಡಿ, ಸತ್ಯಾಸತ್ಯತೆ ಬಹಿರಂಗಪಡಿಸುತ್ತೇವೆ: ಸಚಿವ ಪ್ರಿಯಾಂಕ್ ಖರ್ಗೆ ಸವಾಲು

ಬೆಂಗಳೂರು: ಮಾಜಿ ಸಚಿವ ತಿಮ್ಮಾಪುರ್ ಹಾಗೂ ನಂಜಯ್ಯಮಠ ಅವರ ಹೆಸರಿನಲ್ಲಿ ಹರಿದಾಡುತ್ತಿರುವ ಆಡಿಯೋ ವಿವಾದಕ್ಕೆ ಸಂಬಂಧಿಸಿದಂತೆ, ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅಧಿಕೃತವಾಗಿ ದೂರು ನೀಡಿದರೆ ಫೊರೆನ್ಸಿಕ್ ಪರೀಕ್ಷೆ ನಡೆಸಿ ಸತ್ಯಾಂಶವನ್ನು ಬಹಿರಂಗಪಡಿಸಲಾಗುವುದು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ತಿಮ್ಮಾಪುರ್ ಮತ್ತು ನಂಜಯ್ಯಮಠ ಇಬ್ಬರೂ ಆಡಿಯೋ ಕುರಿತು ಈಗಾಗಲೇ ಸ್ಪಷ್ಟನೆ ನೀಡಿದ್ದಾರೆ. ಆಡಿಯೋ ಛಲವಾದಿ ನಾರಾಯಣಸ್ವಾಮಿ ಅವರ ಬಳಿ ಇದೆ ಎಂದು ಹೇಳಲಾಗುತ್ತಿದೆ. ಹೀಗಾಗಿ ಅವರು ಅಧಿಕೃತವಾಗಿ ದೂರು ಸಲ್ಲಿಸಿದರೆ ಪ್ರಕರಣವನ್ನು ಕಾನೂನುಬದ್ಧವಾಗಿ ಪರಿಶೀಲಿಸಲಾಗುವುದು ಎಂದು ಹೇಳಿದರು.

“ನಾನೇ ಗೃಹ ಸಚಿವನಾಗಿದ್ದೇನೆ. ದೂರು ಕೊಡಿ. ಆಡಿಯೋವನ್ನು ಫೊರೆನ್ಸಿಕ್ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿ ವರದಿ ಪಡೆಯುತ್ತೇವೆ. ಆಡಿಯೋ ನಿಮಗೆ ಹೇಗೆ ಸಿಕ್ಕಿತು ಎಂಬುದನ್ನು ನೀವು ತಿಳಿಸಿ. ಅದು ನಿಜವಾಗಿಯೂ ಅವರ ಧ್ವನಿಯೇ ಅಥವಾ ಅಲ್ಲವೇ ಎಂಬುದನ್ನು ತನಿಖೆಯ ಬಳಿಕ ಸ್ಪಷ್ಟಪಡಿಸುತ್ತೇವೆ” ಎಂದು ಪ್ರಿಯಾಂಕ್ ಖರ್ಗೆ ಹೇಳಿದರು.

ಯಾವುದೇ ಅಧಿಕೃತ ದೂರು ಇಲ್ಲದೆ ಕೇವಲ ಆಡಿಯೋ ವೈರಲ್ ಆಗಿದೆ ಎಂಬ ಕಾರಣಕ್ಕೆ ಸರ್ಕಾರ ಪ್ರತಿಕ್ರಿಯಿಸುವುದು ಸರಿಯಲ್ಲ. ಛಲವಾದಿ ನಾರಾಯಣಸ್ವಾಮಿ ನನ್ನ ಆತ್ಮೀಯ ಸ್ನೇಹಿತರೂ ಆಗಿದ್ದಾರೆ. ಅವರು ನೀಡುವ ದೂರನ್ನು ಸರ್ಕಾರ ಗಂಭೀರವಾಗಿ ಪರಿಗಣಿಸುತ್ತದೆ ಎಂದು ತಿಳಿಸಿದರು.

ದೂರು ದಾಖಲಾದರೆ ತನಿಖೆ ನಡೆಸಿ, ಫೊರೆನ್ಸಿಕ್ ವರದಿಯ ಆಧಾರದ ಮೇಲೆ ಸತ್ಯಾಂಶವನ್ನು ವಿಧಾನಸಭೆಯಲ್ಲಿಯೂ ಮಂಡಿಸಲಾಗುವುದು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟಪಡಿಸಿದರು.

ಬೆಂಗಳೂರಿನಲ್ಲಿ ಲಾಲ್ ಬಾಗ್ ಮಾದರಿ 3 ಉದ್ಯಾನ ನಿರ್ಮಾಣಕ್ಕೆ ಚಿಂತನೆ: ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು: “ಬೆಂಗಳೂರಿನಲ್ಲಿ ಲಾಲ್ ಬಾಗ್ ಮಾದರಿಯ 3 ಉದ್ಯಾನ ನಿರ್ಮಾಣ ಮಾಡಲು ನಮ್ಮ ಸರ್ಕಾರ ಚಿಂತನೆ ನಡೆಸಿದೆ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಲಾಲ್ ಬಾಗ್ ನಲ್ಲಿ ‘ಗಂಗ ಸಾಮ್ರಾಜ್ಯ ವೈಭವ’ ಪರಿಕಲ್ಪನೆಯಲ್ಲಿ ಆಯೋಜಿಸಲಾಗಿರುವ 220ನೇ ಫಲಪುಷ್ಪ ಪ್ರದರ್ಶನಕ್ಕೆ ಶಿವಕುಮಾರ್ ಅವರು ಗುರುವಾರ ಚಾಲನೆ ನೀಡಿ, ಮಾಧ್ಯಮಗಳೊಂದಿಗೆ ಮಾತನಾಡಿದರು.

“ಬೆಂಗಳೂರಿನಲ್ಲಿರುವ ರಕ್ಷಣಾ ಇಲಾಖೆ ಜಾಗದಲ್ಲಿ ಇಂತಹ ಉದ್ಯಾನ ನಿರ್ಮಾಣ ಮಾಡುವ ಉದ್ದೇಶವಿದೆ. ಈ ಭೂಮಿ ರಕ್ಷಣಾ ಇಲಾಖೆ ವಶದಲ್ಲೇ ಇರುತ್ತದೆ. ಆದರೆ ಅಲ್ಲಿ ಇಂತಹ ಉದ್ಯಾನ ನಿರ್ಮಿಸಲು ಅನುಮತಿ ಬೇಕು ಎಂದು ಪತ್ರ ಬರೆದಿದ್ದು, ಸಧ್ಯದಲ್ಲೇ ರಕ್ಷಣಾ ಸಚಿವರನ್ನು ಭೇಟಿ ಮಾಡುತ್ತೇನೆ. ವಾರಣಾಸಿಯಲ್ಲಿ ರಕ್ಷಣಾ ಇಲಾಖೆ ಜಾಗದಲ್ಲಿ ಉದ್ಯಾನ ನಿರ್ಮಿಸಲು ಪ್ರಧಾನಮಂತ್ರಿಗಳು ಅನುಮತಿ ನೀಡಿದ್ದಾರೆ.

ಇದರ ಜೊತೆಗೆ ಬೆಂಗಳೂರು ನಗರದೊಳಗೆ ಇರುವ ಅರಣ್ಯ ಜಾಗದಲ್ಲಿ ಇಂತಹ ಉದ್ಯಾನವನ ನಿರ್ಮಿಸಲು ತೀರ್ಮಾನಿಸಲಾಗಿದ್ದು, ಈ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳ ಜೊತೆ ಚರ್ಚಿಸಲಾಗಿದೆ. ಜಿಬಿಎ, ಬಿಡಿಎ, ತೋಟಗಾರಿಕೆ ಇಲಾಖೆ ಸೇರಿದಂತೆ ಇತರ ಇಲಾಖೆಗಳಿಗೆ ಜವಾಬ್ದಾರಿ ವಹಿಸಿ ನಿರ್ಮಿಸಲು ಆಲೋಚಿಸಿದ್ದೇವೆ. ನಮ್ಮ ಕಾಲದಲ್ಲಿ ನಗರದ ಹಸಿರು ಕಾಪಾಡಿ, ಸಾರ್ವಜನಿಕರ ಬದುಕಿಗೆ ಅನುಕೂಲ ಮಾಡಿಕೊಡಲು ಮುಂದಾಗಿದ್ದೇವೆ” ಎಂದು ತಿಳಿಸಿದರು.

ನಾಗರಿಕರು ಬಂದು ಈ ಫಲಪುಷ್ಪ ಪ್ರದರ್ಶನ ಕಣ್ತುಂಬಿಕೊಳ್ಳಬೇಕು:

“ಲಾಲ್ ಬಾಗ್ ಕೇವಲ ಉದ್ಯಾನವನ ಮಾತ್ರವಲ್ಲ. ಇದೊಂದು ಇತಿಹಾಸ. ಗಂಗ ಸಾಮ್ರಾಜ್ಯದಲ್ಲಿ ಕೃಷಿಕರು, ರೈತರ ಇತಿಹಾಸವನ್ನು ಇಟ್ಟುಕೊಂಡು ಈ ಫಲಪುಷ್ಟ ಪ್ರದರ್ಶನವನ್ನು ರೂಪಿಸಲಾಗಿದೆ. ಗಂಗರು ಆಗಿನ ಕಾಲದಲ್ಲಿ ಕಟ್ಟಿದ್ದ ಕೆರೆಗಳು ಇಂದಿಗೂ ಉಳಿದಿವೆ. ಕಷ್ಟಕಾಲದಲ್ಲಿ ಆ ಕೆರೆಗಳು ರಕ್ಷಣೆ ಮಾಡಿವೆ. ಗಂಗರ ಇತಿಹಾಸ ಸಮಾನತೆ, ಕೃಷಿಕರ ಬದುಕು, ಹೋರಾಟವನ್ನು ಹೊಂದಿದೆ.

ಇದು ನಮ್ಮ ಸಂಸ್ಕೃತಿ, ರೈತರ ಬದುಕು ಹಾಗೂ ಕಲೆಯ ಸಂಭ್ರಮ. ಈ ವರ್ಷದ ಸ್ವಾತಂತ್ರ್ಯ ಸಂಭ್ರಮದಲ್ಲಿ ನಾಡಿನ ಜನತೆ ಈ ಫಲಪುಷ್ಟ ಪ್ರದರ್ಶನ ವೀಕ್ಷಿಸಿ ಆನಂದಿಸಬೇಕು. ಯುವಕರು, ಮಹಿಳೆಯರು, ಹಿರಿಯರು ಸೇರಿದಂತೆ ಎಲ್ಲರೂ ಈ ಪ್ರದರ್ಶನವನ್ನು ಕಣ್ತುಂಬಿಕೊಳ್ಳಬೇಕು ಎಂದು ಮನವಿ ಮಾಡುತ್ತೇನೆ. ಈ ಕಾರ್ಯಕ್ರಮವನ್ನು ನಾನು ಉದ್ಘಾಟಿಸಿರುವುದು ಸಂತೋಷ ತಂದಿದೆ. 10 ದಿನಗಳ ಕಾಲ ಈ ಪ್ರದರ್ಶನ ನಡೆಯಲಿದೆ. ಲಾಲ್‌ ಬಾಗ್‌ ಅನ್ನು ಹೈದರಾಲಿ ಸ್ಥಾಪಿಸಿದರು, ಬ್ರಿಟೀಷರು ಅಭಿವೃದ್ದಿ ಮಾಡಿದರು. ಈಗ ಕರ್ನಾಟಕ ಸರ್ಕಾರ ಮುಂದುವರಿಸುತ್ತಿದೆ” ಎಂದು ತಿಳಿಸಿದರು.

“ಈ ವರ್ಷ ಗಂಗ ಸಾಮ್ರಾಜ್ಯ ರೂಪುಗೊಂಡಿದೆ. ದಕ್ಷಿಣ ಭಾರತದ ಗಂಗರ ಸಾಮ್ರಾಜ್ಯದ ವೈಭವವನ್ನು ಪುಷ್ಪಗಳ ಮೂಲಕ ಮೂಡಿಸಲಾಗಿದೆ. ಅವರ ಹೋರಾಟ, ಸಂಸ್ಕೃತಿ ಎಲ್ಲವೂ ಇಲ್ಲಿ ಅನಾವರಣಗೊಂಡಿದೆ. ಗಂಗರ ಇತಿಹಾಸ ಕರ್ನಾಟಕ ರಾಜ್ಯದ ಇತಿಹಾಸದ ಭಾಗ. ತೋಟಗಾರಿಕಾ ಇಲಾಖೆಯವರು ಈ ಪರಿಕಲ್ಪನೆಯನ್ನು ಅತ್ಯುತ್ತಮವಾಗಿ ರೂಪಿಸಿದ್ದಾರೆ” ಎಂದು ಹೇಳಿದರು.

ಆಗಸ್ಟ್ 15ರಂದು ರೈತರು, ಸರ್ಕಾರದ ಪಾಲುದಾರಿಕೆ ಕಾರ್ಯಕ್ರಮ ಪ್ರಕಟ

“ರಾಜ್ಯದಲ್ಲಿ ಹಸಿರು ಹೆಚ್ಚಿಸಿ ರೈತರ ಬದುಕು ಕಾಪಾಡುವ ನಿಟ್ಟಿನಲ್ಲಿ ಕಾರ್ಯಕ್ರಮ ರೂಪಿಸಿದ್ದೇವೆ. ಇದು ರೈತರು ಹಾಗೂ ಸರ್ಕಾರದ ನಡುವಿನ ಪಾಲುದಾರಿಕೆಯ ಕಾರ್ಯಕ್ರಮವಾಗಿದೆ. ಇದನ್ನು ಆಗಸ್ಟ್ 15ರಂದು ಪ್ರಕಟಿಸುತ್ತೇವೆ. ಸರ್ಕಾರದ 100 ದಿನಗಳ ಕಾರ್ಯಕ್ರಮ ರೂಪಿಸಲಾಗಿದ್ದು, ರೈತರ ಬದುಕಿಗೆ ಯಾವ ರೀತಿ ಶಕ್ತಿ ತುಂಬಬೇಕು ಎಂದು ಆಲೋಚಿಸಿ ಕಾರ್ಯಕ್ರಮ ರೂಪಿಸುತ್ತಿದ್ದೇವೆ” ಎಂದು ತಿಳಿಸಿದರು.

ನಮ್ಮಲ್ಲಿ ಎಲ್ಲಾ ಶಾಸಕರು ಸಚಿವ ಸ್ಥಾನಕ್ಕೆ ಅರ್ಹರು:

ಕಾಂಗ್ರೆಸ್ ಹಿರಿಯ ನಾಯಕರ ಮನೆಗೆ ಭೇಟಿ ನೀಡಿದ್ದು ಸಮಸ್ಯೆ ಬಗೆಹರಿಸಲಾಗಿದೆಯೇ ಎಂದು ಕೇಳಿದಾಗ, “ನಮ್ಮಲ್ಲಿ ಯಾವುದೇ ಸಮಸ್ಯೆ ಇಲ್ಲ. ಸಮಸ್ಯೆ ಇರುವುದು ಮಾಧ್ಯಮಗಳಲ್ಲಿ. ನಮ್ಮ ಹಿರಿಯ ನಾಯಕರ ಭಾವನೆಗೆ ನಾವು ಗೌರವ ಸಲ್ಲಿಸಬೇಕು. 140 ಶಾಸಕರು ಹಾಗೂ 40 ಪರಿಷತ್ ಸದಸ್ಯರಿದ್ದು, ಆ ಪೈಕಿ ನಾವು ಸಚಿವ ಸ್ಥಾನ ನೀಡಲು ಸಾಧ್ಯವಿರುವುದು ಕೇವಲ 33 ಜನರಿಗೆ ಮಾತ್ರ. ನಮ್ಮ ಪಕ್ಷದಲ್ಲಿ ಎಲ್ಲರೂ ಅರ್ಹರೆ. ನಾವು ಅವರ ಆಸೆ ತಪ್ಪು ಎಂದು ಹೇಳಲು ಸಾಧ್ಯವಿಲ್ಲ. ಎಲ್ಲರೂ ಒಟ್ಟಾಗಿ ಕೆಲಸ ಮಾಡಬೇಕು. ಎಲ್ಲರೂ ಕಾಂಗ್ರೆಸ್ ಪಕ್ಷಕ್ಕೆ ಪ್ರಾಮಾಣಿಕರಾಗಿದ್ದು, ಎಲ್ಲರೂ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದಾರೆ” ಎಂದು ತಿಳಿಸಿದರು.

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: 4 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಕೊಚ್ಚಿಯಲ್ಲಿ ಬಂಧನ!

ಬೆಂಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಉಮರ್ ಫಾರೂಕ್ ಎಂ.ಆರ್. ಎಂಬಾತನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಬಂಧಿಸಿದೆ.

ವಿಶ್ವಾಸಾರ್ಹ ಗುಪ್ತಚರ ಮಾಹಿತಿಯ ಆಧಾರದ ಮೇಲೆ ಎನ್‌ಐಎ ಅಧಿಕಾರಿಗಳು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ ಕೇರಳದ ಕೊಚ್ಚಿಯಲ್ಲಿ ಉಮರ್ ಫಾರೂಕ್‌ನನ್ನು ವಶಕ್ಕೆ ಪಡೆಯಲಾಗಿದೆ. ಈ ಬಂಧನದೊಂದಿಗೆ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಇದುವರೆಗೆ ಬಂಧಿತರಾದ ಆರೋಪಿಗಳ ಸಂಖ್ಯೆ 25ಕ್ಕೆ ಏರಿಕೆಯಾಗಿದೆ.

ಹತ್ಯೆ ನಡೆದ ಬಳಿಕ ತಲೆಮರೆಸಿಕೊಂಡಿದ್ದ ಉಮರ್ ಫಾರೂಕ್ ವಿರುದ್ಧ ಇಂಟರ್‌ಪೋಲ್ ಮೂಲಕ ರೆಡ್ ಕಾರ್ನರ್ ನೋಟಿಸ್ (RCN) ಹಾಗೂ ನ್ಯಾಯಾಲಯದಿಂದ ಜಾಮೀನು ರಹಿತ ಬಂಧನ ವಾರಂಟ್ (NBW) ಜಾರಿಯಾಗಿತ್ತು. ಈತನ ಬಂಧನಕ್ಕೆ ನೆರವಾಗುವ ಮಾಹಿತಿಯನ್ನು ನೀಡಿದವರಿಗೆ ಎನ್‌ಐಎ 2 ಲಕ್ಷ ರೂಪಾಯಿ ಬಹುಮಾನ ಘೋಷಿಸಿತ್ತು.

ತನಿಖೆಯ ಪ್ರಕಾರ, ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (PFI) ಸಂಘಟನೆಯ ಸುಳ್ಯ ಕಚೇರಿಯಲ್ಲಿ ನಡೆದ ಪ್ರವೀಣ್ ನೆಟ್ಟಾರು ಹತ್ಯೆಯ ಸಂಚು ಸಭೆಯಲ್ಲಿ ಉಮರ್ ಫಾರೂಕ್ ಇತರ ಆರೋಪಿಗಳೊಂದಿಗೆ ಸಕ್ರಿಯವಾಗಿ ಭಾಗವಹಿಸಿದ್ದ ಎನ್ನಲಾಗಿದೆ.

ಹತ್ಯೆಗೂ ಮುನ್ನ ಬೆಳ್ಳಾರೆ ಗ್ರಾಮದಲ್ಲಿ ಪ್ರವೀಣ್ ನೆಟ್ಟಾರು ಅವರ ಚಲನವಲನಗಳ ಮೇಲೆ ನಿಗಾ ಇಡಲು ಹಾಗೂ ದಾಳಿ ನಡೆಸುವ ಸ್ಥಳವನ್ನು ಗುರುತಿಸಲು ಸಹ-ಆರೋಪಿಯೊಬ್ಬನಿಗೆ ತನ್ನ ಬೈಕ್‌ನ್ನು ಉಮರ್ ಫಾರೂಕ್ ನೀಡಿದ್ದ ಎಂಬ ಮಾಹಿತಿ ತನಿಖೆಯಲ್ಲಿ ಬಹಿರಂಗವಾಗಿದೆ.

ಇದರ ಜೊತೆಗೆ, ಈ ಪ್ರಕರಣದ ಸಂರಕ್ಷಿತ ಸಾಕ್ಷಿದಾರನ (Protected Witness) ಮೇಲೆ ನಡೆದ ಕೊಲೆ ಯತ್ನದ ಸಂಚಿನಲ್ಲೂ ಉಮರ್ ಫಾರೂಕ್ ಭಾಗಿಯಾಗಿದ್ದಾನೆ ಎಂಬ ಗಂಭೀರ ಆರೋಪವೂ ಕೇಳಿಬಂದಿದೆ.

ನಾನು ಡಿಕೆ ಶಿವಕುಮಾರ್ ಅವರ ಮನೆ ಮಗ, ಶಿವನ ಮುಂದೆ ಇರುವ ಬಸವ: ಶಾಸಕ ಶಿವಗಂಗಾ ಬಸವರಾಜ್

ದಾವಣಗೆರೆ: “ನಾನು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಮನೆಮಗ. ಶಿವನ ಮುಂದೆ ಇರುವ ಬಸವನಂತೆ ನಾನು. ನಾನೇ ಮುಖ್ಯಮಂತ್ರಿ ಇದ್ದಂತೆಯೇ, ಮನೆಮಗನ ಮೇಲೆ ಅವರ ಆಶೀರ್ವಾದ ಯಾವಾಗಲೂ ಇರುತ್ತದೆ” ಎಂದು ಶಾಸಕ ಶಿವಗಂಗಾ ಬಸವರಾಜ್ ಹೇಳಿಕೆ ನೀಡಿದ್ದಾರೆ.

ದಾವಣಗೆರೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಚಿವ ಸ್ಥಾನ ಸಿಗುವ ನಿರೀಕ್ಷೆ ಹೊಂದಿದ್ದೆ. ಆದರೆ ಈ ಬಾರಿ ಅವಕಾಶ ಸಿಕ್ಕಿಲ್ಲ. ಮುಂದಿನ ದಿನಗಳಲ್ಲಿ ಇನ್ನೂ ಸಾಕಷ್ಟು ಅವಕಾಶಗಳಿದ್ದು, ಅದರ ಬಗ್ಗೆ ಕಾದು ನೋಡೋಣ ಎಂದು ಹೇಳಿದರು.

“ಪಕ್ಷದಲ್ಲಿ ಐದು-ಆರು ಬಾರಿ ಗೆದ್ದಿರುವ ಹಿರಿಯ ಶಾಸಕರು ಇದ್ದಾರೆ. ಅವರ ನಡುವೆ ನನಗೂ ಸಚಿವ ಸ್ಥಾನ ಸಿಗುವ ವಿಶ್ವಾಸ ಇತ್ತು. ಆದರೆ ಈಗ ಅದರ ಬಗ್ಗೆ ಮಾತನಾಡುವುದಕ್ಕಿಂತ ಕ್ಷೇತ್ರದ ಅಭಿವೃದ್ಧಿಯತ್ತ ಗಮನ ಹರಿಸುವುದು ಮುಖ್ಯ” ಎಂದು ತಿಳಿಸಿದರು.

ಭ್ರಷ್ಟಾಚಾರದ ಆರೋಪ ಎದುರಿಸುತ್ತಿದ್ದರೂ ಬಿ. ನಾಗೇಂದ್ರ ಅವರಿಗೆ ಸಚಿವ ಸ್ಥಾನ ನೀಡಿರುವುದನ್ನು ವಿರೋಧ ಪಕ್ಷಗಳು ಟೀಕಿಸುತ್ತಿರುವ ಕುರಿತು ಪ್ರತಿಕ್ರಿಯಿಸಿದ ಅವರು, “ಭ್ರಷ್ಟಾಚಾರದ ಆರೋಪ ಯಾರ ಮೇಲೆ ಇಲ್ಲ ಹೇಳಿ? ಬಿಜೆಪಿಗೆ ಈ ವಿಚಾರದಲ್ಲಿ ಮಾತನಾಡುವ ನೈತಿಕತೆ ಇಲ್ಲ. ಆರೋಪ ಇರುವುದು ಬೇರೆ, ಅಪರಾಧ ಸಾಬೀತಾಗುವುದು ಬೇರೆ. ಕಾನೂನಿನ ಪ್ರಕಾರ ಬಂಧನವಾಗಿತ್ತು. ಈಗ ಅವರು ಹೊರಬಂದಿದ್ದಾರೆ. ಅವರಿಗೆ ಸಚಿವ ಸ್ಥಾನ ನೀಡಿರುವುದು ಸರಿಯಾದ ನಿರ್ಧಾರ” ಎಂದು ಸಮರ್ಥಿಸಿಕೊಂಡರು.

ಸಚಿವ ಸಂಪುಟದಲ್ಲಿ ಡಿ.ಕೆ. ಶಿವಕುಮಾರ್ ಅಥವಾ ಸಿದ್ದರಾಮಯ್ಯ ಅವರ ಆಪ್ತರಿಗೆ ಪ್ರತ್ಯೇಕವಾಗಿ ಸ್ಥಾನ ನೀಡಲಾಗಿದೆ ಎನ್ನುವ ಮಾತು ಸರಿಯಲ್ಲ. ಪ್ರಾದೇಶಿಕ ಸಮತೋಲನದ ಆಧಾರದ ಮೇಲೆ ಸಚಿವ ಸ್ಥಾನಗಳನ್ನು ಹಂಚಿಕೆ ಮಾಡಲಾಗಿದೆ. ನಮ್ಮ ಭಾಗದ ಕೆ.ಎಸ್. ಬಸವಂತಪ್ಪ ಅವರಿಗೆ ಅವಕಾಶ ನೀಡಿರುವುದು ಸಂತಸದ ವಿಷಯ ಎಂದು ಹೇಳಿದರು.

ಇದೇ ವೇಳೆ, “ನಾನು ರೈತರ ಕೋಟಾದಡಿ ಸಚಿವ ಸ್ಥಾನ ಕೇಳಿದ್ದೆ. ಆದರೆ ಈ ಬಾರಿ ಸಿಗಲಿಲ್ಲ. ಇನ್ನೂ ರಾಜಕೀಯ ಜೀವನದ ಆರಂಭದ ಹಂತದಲ್ಲಿದ್ದೇನೆ. ಮುಂದೆಯೂ ಅವಕಾಶಗಳಿವೆ. ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ಹುದ್ದೆ ನೀಡಿದರೂ ಸಮರ್ಥವಾಗಿ ನಿಭಾಯಿಸುತ್ತೇನೆ” ಎಂದು ತಮ್ಮ ಆಕಾಂಕ್ಷೆಯನ್ನು ಬಹಿರಂಗಪಡಿಸಿದರು.

ಮಧ್ಯರಾತ್ರಿ ಟೆಕ್ಕಿಯ ಹುಚ್ಚಾಟ! 45 ನಿಮಿಷ ಏರ್‌ಗನ್ ಫೈರಿಂಗ್: ಕಾರುಗಳ ಗಾಜು ಪುಡಿ ಪುಡಿ

ಆನೇಕಲ್: ಕುಡಿದ ಅಮಲಿನಲ್ಲಿ ಟೆಕ್ಕಿಯೊಬ್ಬ ಅಪಾರ್ಟ್‌ಮೆಂಟ್‌ನ ಬಾಲ್ಕನಿಯಿಂದ ಏರ್‌ಗನ್‌ನಿಂದ ಅಡ್ಡಾದಿಡ್ಡಿ ಫೈರಿಂಗ್ ನಡೆಸಿ ನಿವಾಸಿಗಳನ್ನು ಬೆಚ್ಚಿಬೀಳಿಸಿದ ಘಟನೆ ಬೆಂಗಳೂರಿನ ಹೊರವಲಯದ ಆನೇಕಲ್ ತಾಲೂಕಿನ ಬಂಡಾಪುರ ಸಮೀಪದ ಸಿಪಾನಿ ಅಪಾರ್ಟ್‌ಮೆಂಟ್‌ನಲ್ಲಿ ನಡೆದಿದೆ. ಕಾರುಗಳು, ಪಾರ್ಕಿಂಗ್ ಪ್ರದೇಶ ಹಾಗೂ ಸೆಕ್ಯುರಿಟಿ ಸಿಬ್ಬಂದಿಯನ್ನು ಗುರಿಯಾಗಿಸಿಕೊಂಡು ಸುಮಾರು 45 ನಿಮಿಷಗಳ ಕಾಲ ನಡೆಸಿದ ಫೈರಿಂಗ್‌ನಿಂದ ಭಾರೀ ಆತಂಕ ಉಂಟಾಯಿತು. ಆರೋಪಿ ಅನುರಾಗ್ ತಿವಾರಿಯನ್ನು ಸೂರ್ಯನಗರ ಪೊಲೀಸರು ಬಂಧಿಸಿದ್ದಾರೆ.

ಉತ್ತರ ಪ್ರದೇಶದ ಲಕ್ನೋ ಮೂಲದ 40 ವರ್ಷದ ಅನುರಾಗ್ ತಿವಾರಿ ವೈಟ್‌ಫೀಲ್ಡ್‌ನ ಖಾಸಗಿ ಐಟಿ ಕಂಪನಿಯಲ್ಲಿ ಉದ್ಯೋಗಿಯಾಗಿದ್ದು, ಕಳೆದ ಎಂಟು ತಿಂಗಳಿಂದ ಅಪಾರ್ಟ್‌ಮೆಂಟ್‌ನ B304 ಫ್ಲಾಟ್‌ನಲ್ಲಿ ವಾಸವಾಗಿದ್ದರು. ಘಟನೆ ನಡೆದ ರಾತ್ರಿ ಕಂಠಪೂರ್ತಿ ಮದ್ಯ ಸೇವಿಸಿದ್ದ ಆತ ಮೊದಲು ಫ್ಲಾಟ್‌ನೊಳಗೆ ಜೋರಾಗಿ ಗಲಾಟೆ ನಡೆಸಿದ್ದಾನೆ.

ನಂತರ ಮಧ್ಯರಾತ್ರಿ ಸುಮಾರು 2.30ರ ವೇಳೆಗೆ ಬಾಲ್ಕನಿಗೆ ಬಂದು ಕೆಳಗಿದ್ದ ಕಾರುಗಳು ಹಾಗೂ ಪಾರ್ಕಿಂಗ್ ಶೆಡ್ ಮೇಲೆ ಏರ್‌ಗನ್‌ನಿಂದ ಗುಂಡು ಹಾರಿಸಲು ಆರಂಭಿಸಿದ್ದಾನೆ. ಫೈರಿಂಗ್ ಶಬ್ದ ಕೇಳಿ ಸ್ಥಳಕ್ಕೆ ಧಾವಿಸಿದ ಸೆಕ್ಯುರಿಟಿ ಗಾರ್ಡ್‌ಗಳ ಮೇಲೆಯೂ ಶೂಟ್ ಮಾಡಿದ್ದಾನೆ. ಈ ಘಟನೆ ಸುಮಾರು 45 ನಿಮಿಷಗಳ ಕಾಲ ಮುಂದುವರಿದಿದ್ದು, ಅಪಾರ್ಟ್‌ಮೆಂಟ್ ನಿವಾಸಿಗಳು ಭಯಭೀತರಾಗಿದ್ದರು.

ಫೈರಿಂಗ್‌ನಲ್ಲಿ ಹಲವು ಕಾರುಗಳ ಗಾಜುಗಳು ಜಖಂಗೊಂಡಿವೆ. ಕಾರು ಮಾಲೀಕ ಬಿದ್ಯುತ್ ನೀಡಿದ ದೂರಿನ ಮೇರೆಗೆ ಸೂರ್ಯನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಸೋಕೋ ತಂಡ ಏರ್‌ಗನ್ ಬಾಲ್ಸ್ ಸೇರಿದಂತೆ ಪ್ರಮುಖ ಸಾಕ್ಷ್ಯಗಳನ್ನು ವಶಪಡಿಸಿಕೊಂಡಿದ್ದು, ಕೃತ್ಯಕ್ಕೆ ಬಳಸಿದ ಏರ್‌ಗನ್‌ನ್ನೂ ಜಪ್ತಿ ಮಾಡಿದೆ.

ಪ್ರಾಥಮಿಕ ತನಿಖೆಯಲ್ಲಿ ಆರೋಪಿಯು ಮದ್ಯದ ಅಮಲಿನಲ್ಲಿ ಈ ಕೃತ್ಯ ಎಸಗಿರುವುದು ಬೆಳಕಿಗೆ ಬಂದಿದ್ದು, ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ಮುಂದುವರಿಸಿದ್ದಾರೆ.

ನನ್ನ ವಿರುದ್ಧದ ಆರೋಪ ಈಗಾಗಲೇ ವಜಾ ಆಗಿದೆ, ಸುಳ್ಳು ಸುದ್ದಿ ಹರಡಿದರೆ ಮಾನನಷ್ಟ ಮೊಕದ್ದಮೆ ಹಾಕ್ತೀನಿ: ಸಚಿವ ಸಿ. ಪುಟ್ಟರಂಗಶೆಟ್ಟಿ ಎಚ್ಚರಿಕೆ!

ಚಾಮರಾಜನಗರ: ಮಂತ್ರಿ ಸ್ಥಾನಕ್ಕಾಗಿ ಹಣ ಪಾವತಿಸಲಾಗಿದೆ ಹಾಗೂ ವಿಧಾನಸೌಧದಲ್ಲಿ ಹಣ ಪಡೆದಿದ್ದಾರೆ ಎಂಬ ಮಾಜಿ ಸಚಿವ ತಿಮ್ಮಾಪುರ ಮತ್ತು ಕಾಂಗ್ರೆಸ್ ಮುಖಂಡ ಎಸ್.ಜಿ. ನಂಜಯ್ಯನಮಠ ಅವರದ್ದು ಎನ್ನಲಾದ ಆಡಿಯೋ ಕುರಿತು ಸಚಿವ ಸಿ. ಪುಟ್ಟರಂಗಶೆಟ್ಟಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಚಾಮರಾಜನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮ್ಮ ವಿರುದ್ಧ ಕೇಳಿಬರುತ್ತಿರುವ ಆರೋಪಗಳನ್ನು ಸಂಪೂರ್ಣವಾಗಿ ತಳ್ಳಿಹಾಕಿದರು.

“ಪುಟ್ಟರಂಗಶೆಟ್ಟಿ ಎಲ್ಲಿ ಹಣ ಹೂತಿಟ್ಟಿದ್ದರು? ಅವರಿಗೆ ಅಷ್ಟೊಂದು ಹಣ ಎಲ್ಲಿಂದ ಬಂತು ಎಂಬುದನ್ನು ಆರೋಪ ಮಾಡುವವರನ್ನೇ ಕೇಳಿ. ಇಲ್ಲವಾದರೆ ನಾನು ಬೇರೆ ರೀತಿಯಲ್ಲಿ ಪ್ರತಿಕ್ರಿಯೆ ನೀಡಬೇಕಾಗುತ್ತದೆ” ಎಂದು ಅವರು ಕಿಡಿಕಾರಿದರು.

ವಿಧಾನಸೌಧದಲ್ಲಿ ಹಣ ಪಡೆದಿದ್ದಾರೆ ಎಂಬ ಆರೋಪದ ಕುರಿತು ಈಗಾಗಲೇ ಎಲ್ಲ ರೀತಿಯ ಪರಿಶೀಲನೆ ನಡೆದಿದೆ. ಈ ಸಂಬಂಧ ಅಗತ್ಯ ಕ್ರಮಗಳೂ ಆಗಿವೆ ಎಂದು ಸಚಿವರು ಸ್ಪಷ್ಟಪಡಿಸಿದರು.

ತಮ್ಮ ವಿರುದ್ಧ ಸುಳ್ಳು ಆರೋಪ ಹಾಗೂ ಅಪಪ್ರಚಾರ ಮುಂದುವರಿದರೆ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ ಅವರು, “ಈ ರೀತಿಯ ಸುಳ್ಳು ಪ್ರಚಾರ ಮಾಡಿದವರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುತ್ತೇನೆ” ಎಂದು ಹೇಳಿದರು.

“ಆಡಿಯೋ ಕುರಿತು ಮಾಹಿತಿ ಸಂಗ್ರಹಿಸುತ್ತಿದ್ದೇನೆ. ಅದು ಯಾರ ಧ್ವನಿ, ಯಾರು ಆ ರೀತಿಯ ಹೇಳಿಕೆ ನೀಡಿದ್ದಾರೆ ಹಾಗೂ ಅದರ ಹಿಂದಿನ ಉದ್ದೇಶವೇನು ಎಂಬುದರ ಬಗ್ಗೆ ಪರಿಶೀಲನೆ ನಡೆಸುತ್ತಿದ್ದೇನೆ” ಎಂದು ಸಿ. ಪುಟ್ಟರಂಗಶೆಟ್ಟಿ ತಿಳಿಸಿದರು.