Home Blog

ಒಂದೇ ಬೈಕ್ ಮೇಲೆ 100 ಕೇಸ್; ಸರ್ಕಾರದ ರಿಯಾಯಿತಿ ಬಳಸಿ 27,500 ರೂ. ದಂಡ ಪಾವತಿಸಿದ ಬೈಕ್ ಸವಾರ!

ಬೆಂಗಳೂರು: ನಗರದಲ್ಲಿ ಸಂಚಾರ ನಿಯಮ ಉಲ್ಲಂಘಿಸುವ ವಾಹನ ಸವಾರರ ವಿರುದ್ಧ ಬೆಂಗಳೂರು ಸಂಚಾರ ಪೊಲೀಸರು ಕಠಿಣ ಕ್ರಮ ಮುಂದುವರಿಸಿದ್ದಾರೆ.

ಇದರ ನಡುವೆ ಸರ್ಕಾರ ಘೋಷಿಸಿರುವ ದಂಡ ರಿಯಾಯಿತಿ ಅವಧಿಯಲ್ಲಿ ಸಾರ್ವಜನಿಕರಿಂದ ದಂಡ ವಸೂಲಿ ಚುರುಕುಗೊಂಡಿದೆ.

ರಾಜಾಜಿನಗರ ಸಂಚಾರ ಪೊಲೀಸ್ ಠಾಣೆಗೆ ಆಗಮಿಸಿದ ಬೈಕ್ ಸವಾರನೊಬ್ಬ, ತನ್ನ ದ್ವಿಚಕ್ರ ವಾಹನದ ಮೇಲೆ ದಾಖಲಾಗಿದ್ದ 100 ಸಂಚಾರ ಉಲ್ಲಂಘನೆ ಪ್ರಕರಣಗಳಿಗೆ ಸಂಬಂಧಿಸಿದ ದಂಡವನ್ನು ಒಂದೇ ಬಾರಿಗೆ ಪಾವತಿಸಿದ್ದಾನೆ. ಶೇಕಡಾ 50ರ ರಿಯಾಯಿತಿಯ ಬಳಿಕ ಒಟ್ಟು 27,500 ರೂಪಾಯಿ ದಂಡ ಪಾವತಿಸಿರುವ ಸವಾರ, ಮುಂದಿನ ದಿನಗಳಲ್ಲಿ ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದಾಗಿ ಭರವಸೆ ನೀಡಿದ್ದಾನೆ.

ಇದರ ಜೊತೆಗೆ ಬೆಂಗಳೂರು ಸಂಚಾರ ಪೊಲೀಸರು ನಗರಾದ್ಯಂತ ಡ್ರಂಕ್ ಅಂಡ್ ಡ್ರೈವ್ ಹಾಗೂ ಅತಿವೇಗ ಚಾಲನೆ ವಿರುದ್ಧ ವಿಶೇಷ ಕಾರ್ಯಾಚರಣೆ ಮುಂದುವರಿಸಿದ್ದಾರೆ. ಜೂನ್ 15 ರಿಂದ ಜೂನ್ 26ರವರೆಗೆ 53 ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆಸಲಾಗುತ್ತಿರುವ ಪರಿಶೀಲನೆಯಲ್ಲಿ 43,057 ವಾಹನಗಳನ್ನು ತಪಾಸಣೆ ಮಾಡಲಾಗಿದೆ.

ಈ ಕಾರ್ಯಾಚರಣೆಯಲ್ಲಿ ಮದ್ಯಪಾನ ಮಾಡಿ ವಾಹನ ಚಲಾಯಿಸಿದ 669 ಚಾಲಕರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಅತಿವೇಗ ಚಾಲನೆ ಮಾಡಿದ 46 ವಾಹನ ಸವಾರರಿಂದ ಒಟ್ಟು 46 ಸಾವಿರ ರೂಪಾಯಿ ದಂಡ ವಸೂಲಾಗಿದೆ ಎಂದು ಸಂಚಾರ ಪೊಲೀಸರು ತಿಳಿಸಿದ್ದಾರೆ.

 

ಆಸ್ಪತ್ರೆಗೆ ತೆರಳಿದ್ದ ಕುಟುಂಬ; ಮನೆಗೆ ವಾಪಸ್ ಬಂದಾಗ ಕಾದಿತ್ತು ಶಾಕ್! ಚಿನ್ನ-ಬೆಳ್ಳಿ, ನಗದು ದೋಚಿದ ಕಳ್ಳರು

ಮೈಸೂರು: ಮನೆ ಮಂದಿ ಆಸ್ಪತ್ರೆಗೆ ತೆರಳಿದ್ದ ವೇಳೆ ಮನೆಗೆ ನುಗ್ಗಿದ ಕಳ್ಳರು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ, ಬೆಳ್ಳಿ ಸಾಮಗ್ರಿಗಳು ಹಾಗೂ ನಗದು ಹಣ ದೋಚಿ ಪರಾರಿಯಾದ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಚಾಮುಂಡಿ ಬಡಾವಣೆಯಲ್ಲಿ ನಡೆದಿದೆ.

ಮೋಹನ್ ಎಂಬುವರ ಮನೆಯಲ್ಲಿ ಈ ಕಳ್ಳತನ ನಡೆದಿದ್ದು, ಕಳ್ಳರು ಸುಮಾರು 300 ಗ್ರಾಂ ಚಿನ್ನಾಭರಣ, 6.5 ಕೆಜಿ ಬೆಳ್ಳಿ ವಸ್ತುಗಳು ಹಾಗೂ ಲಕ್ಷಾಂತರ ರೂಪಾಯಿ ನಗದನ್ನು ಕಳವು ಮಾಡಿಕೊಂಡು ಪರಾರಿಯಾಗಿದ್ದಾರೆ.

ಘಟನೆ ನಡೆದ ವೇಳೆ ಮನೆಯವರು ಆಸ್ಪತ್ರೆಗೆ ತೆರಳಿದ್ದರು. ಇದನ್ನೇ ಸದುಪಯೋಗಪಡಿಸಿಕೊಂಡ ಖದೀಮರು ಬೈಕ್‌ನಲ್ಲಿ ಬಂದು ಮನೆಯ ಹಿಂಭಾಗದ ಅಡುಗೆ ಮನೆಯ ಕಿಟಕಿಯ ರಾಡ್ ಮುರಿದು ಒಳನುಗ್ಗಿದ್ದಾರೆ. ಬಳಿಕ ನೇರವಾಗಿ ಮೇಲ್ಮಹಡಿಗೆ ತೆರಳಿದ ಕಳ್ಳರು ಅಲ್ಲಿದ್ದ ಬೀರುವಿನ ಬೀಗ ಒಡೆದು ಅದರಲ್ಲಿದ್ದ ಬೆಲೆಬಾಳುವ ವಸ್ತುಗಳನ್ನು ದೋಚಿದ್ದಾರೆ.

ಕಳವಾದ ವಸ್ತುಗಳಲ್ಲಿ ಸುಮಾರು 300 ಗ್ರಾಂ ಚಿನ್ನಾಭರಣ, 6.5 ಕೆಜಿ ಬೆಳ್ಳಿ ಸಾಮಗ್ರಿಗಳು ಹಾಗೂ ಲಕ್ಷಾಂತರ ರೂಪಾಯಿ ನಗದು ಸೇರಿವೆ ಎಂದು ತಿಳಿದುಬಂದಿದೆ. ಕಳ್ಳತನ ನಡೆಸಿದ ಬಳಿಕ ಮನೆಯಲ್ಲಿದ್ದ ಸೂಟ್‌ಕೇಸ್‌ಗಳು ಸೇರಿದಂತೆ ಇತರೆ ವಸ್ತುಗಳನ್ನೂ ಪರಿಶೀಲಿಸಿರುವ ಶಂಕೆ ವ್ಯಕ್ತವಾಗಿದೆ.

ಆಸ್ಪತ್ರೆಯಿಂದ ಮನೆಗೆ ಮರಳಿದ ಕುಟುಂಬಸ್ಥರು ಮನೆಯ ಬಾಗಿಲು ಹಾಗೂ ಬೀರುವಿನ ಸ್ಥಿತಿ ಕಂಡು ಬೆಚ್ಚಿಬಿದ್ದಿದ್ದಾರೆ. ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದು, ನಂಜನಗೂಡು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಕಳ್ಳರ ಪತ್ತೆಗಾಗಿ ತನಿಖೆ ಆರಂಭಿಸಿದ್ದು, ಸಿಸಿಟಿವಿ ದೃಶ್ಯಾವಳಿಗಳ ಪರಿಶೀಲನೆ ನಡೆಸುತ್ತಿದ್ದಾರೆ. ಘಟನೆಯಿಂದ ಸ್ಥಳೀಯ ನಿವಾಸಿಗಳಲ್ಲಿ ಆತಂಕ ಮನೆ ಮಾಡಿದೆ.

ಬೆಂಗಳೂರಿಗರ ಗಮನಕ್ಕೆ! ಇಂದು, ನಾಳೆ ಪವರ್ ಕಟ್, ಕರೆಂಟ್ ಇಲ್ಲದ ಏರಿಯಾಗಳ ಲಿಸ್ಟ್ ಇಲ್ಲಿದೆ

ಬೆಂಗಳೂರು: ನಗರದ ವಿವಿಧ ಭಾಗಗಳಲ್ಲಿ ತುರ್ತು ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿಗಳು ಹಾಗೂ ಟ್ರಾನ್ಸ್‌ಫಾರ್ಮರ್‌ಗಳ ನಿರ್ವಹಣಾ ಕಾರ್ಯ ಕೈಗೊಳ್ಳಲಾಗುತ್ತಿರುವ ಹಿನ್ನೆಲೆಯಲ್ಲಿ ಇಂದು ಮತ್ತು ನಾಳೆ ಹಲವು ಪ್ರದೇಶಗಳಲ್ಲಿ ಪವರ್ ಕಟ್ ಇರಲಿದೆ ಎಂದು ಬೆಸ್ಕಾಂ ತಿಳಿಸಿದೆ.

ಬೆಸ್ಕಾಂ ಬಿಡುಗಡೆ ಮಾಡಿರುವ ಅಧಿಕೃತ ಪ್ರಕಟಣೆಯ ಪ್ರಕಾರ, ಜೂನ್ 22ರಂದು ಬೆಳಿಗ್ಗೆ 9 ಗಂಟೆಯಿಂದ ಸುಮಾರು 7 ಗಂಟೆಗಳ ಕಾಲ ವಿವಿಧ ವಲಯಗಳಲ್ಲಿ ವಿದ್ಯುತ್ ಪೂರೈಕೆ ಸ್ಥಗಿತಗೊಳ್ಳಲಿದೆ. ಕಾಮಗಾರಿಗಳನ್ನು ಸುಗಮವಾಗಿ ಪೂರ್ಣಗೊಳಿಸುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದ್ದು, ಸಾರ್ವಜನಿಕರು ಮುಂಚಿತವಾಗಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡಿರಲು ಸೂಚಿಸಲಾಗಿದೆ.

ಉತ್ತರ ವಲಯದ ಸೋಲದೇವನಹಳ್ಳಿ, ಹೆಸರಘಟ್ಟ, ತರಬನಹಳ್ಳಿ, ಹುರುಳಿಚಿಕ್ಕನಹಳ್ಳಿ, ಟಿ.ಬಿ. ಕ್ರಾಸ್, ಬಿಲಿಜಾಜಿ ದ್ವಾರಕಾನಗರ, ಚಿಕ್ಕಬಾಣಾವರ, ಮಾರುತಿ ನಗರ, ಗಣಪತಿ ನಗರ, ಬ್ರದರ್ಸ್ ಕಾಲೋನಿ, ಕೃಷ್ಣ ಕಾಲೇಜು ರಸ್ತೆ, ರಾಘವೇಂದ್ರ ಲೇಔಟ್, ಸಾಸುವೆಘಟ್ಟ, ಶಿವಕುಮಾರಸ್ವಾಮೀಜಿ ಲೇಔಟ್, ಶಿವಕೋಟೆ, ಮಾವಳ್ಳಿಪುರ, ಕೊಂಡಶೆಟ್ಟಿಹಳ್ಳಿ, ಬ್ಯಾಲಕೆರೆ, ಸೋಮಶೆಟ್ಟಿಹಳ್ಳಿ, ದಾಸೇನಹಳ್ಳಿ, ಗುಡ್ಡದಹಳ್ಳಿ ಹಾಗೂ ಹೊಸಹಳ್ಳಿ ಪಾಳ್ಯ ಸೇರಿದಂತೆ ಹಲವು ಪ್ರದೇಶಗಳಲ್ಲಿ ವಿದ್ಯುತ್ ಕಡಿತವಾಗಲಿದೆ.

ಇದರ ಜೊತೆಗೆ ಔಟರ್ ರಿಂಗ್ ರೋಡ್ ಸುತ್ತಮುತ್ತಲಿನ ಸೆಸ್ನಾ ಬಿಸಿನೆಸ್ ಪಾರ್ಕ್, ಎಕ್ಸೋರಾ ಬಿಸಿನೆಸ್ ಪಾರ್ಕ್, ಶೋಭಾ ಅಪಾರ್ಟ್‌ಮೆಂಟ್ಸ್, ವಿಕಾಸ್ ಟೆಲಿಕಾಂ, ಐಬಿಸ್ ಹೋಟೆಲ್ ಮತ್ತು ತಕ್ಷಶಿಲಾ ಹೆಲ್ತ್‌ಕೇರ್ ಪ್ರದೇಶಗಳಲ್ಲಿಯೂ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ಪೂರ್ವ ವಲಯದ ಗೋವಿಂದಪುರ, ಕಾರ್ಲೆ, ಬೃಂದಾವನ ನಗರ, ಗಾಂಧಿನಗರ, ಹೆಗ್ಡೆ ನಗರ, ಬಿಎಂಟಿಸಿ ಡಿಪೋ ಹಾಗೂ ಸುತ್ತಮುತ್ತಲಿನ ಪ್ರದೇಶಗಳು ಮತ್ತು ಕೇಂದ್ರ ವಲಯದ ಎಂ.ಜಿ. ರಸ್ತೆ, ಬ್ರಿಗೇಡ್ ರಸ್ತೆ, ಮ್ಯೂಸಿಯಂ ರಸ್ತೆ, ಸೇಂಟ್ ಮಾರ್ಕ್ಸ್ ರಸ್ತೆ, ಹೇಸ್ ರಸ್ತೆ, ಕಾನ್ವೆಂಟ್ ರಸ್ತೆ, ರೆಸಿಡೆನ್ಸಿ ರಸ್ತೆ, ಕೇಂಬ್ರಿಡ್ಜ್ ಲೇಔಟ್, ಗೌತಮಪುರ, ಆರ್ಟಿಲರಿ ರಸ್ತೆ, ಎಂವಿ ಗಾರ್ಡನ್ ಸೇರಿದಂತೆ ಹಲವು ಪ್ರಮುಖ ಪ್ರದೇಶಗಳು ಪವರ್ ಕಟ್ ವ್ಯಾಪ್ತಿಗೆ ಒಳಪಡಲಿವೆ.

ದಕ್ಷಿಣ ವಲಯದ ಅಂಜನಾಪುರ, ಆವಲಹಳ್ಳಿ, ರಾಘವನಪಾಳ್ಯ, ನಾಗೇಗೌಡನ ಪಾಳ್ಯ, ನಾರಾಯಣನಗರ, ಅಮೃತನಗರ, ವಡ್ಡರಪಾಳ್ಯ, ಕೆಂಬತ್ತಹಳ್ಳಿ, ತಲಘಟ್ಟಪುರ ಹಾಗೂ ಸುತ್ತಮುತ್ತಲಿನ ಬಡಾವಣೆಗಳಲ್ಲಿಯೂ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ಇನ್ನು ಪಶ್ಚಿಮ ವಲಯದ ಮಲ್ಲೇಶ್ವರಂ, ವೈಯಾಲಿಕಾವಲ್, ಕೋದಂಡರಾಮಪುರ, ಅಂಬೇಡ್ಕರ್ ನಗರ, ಮತ್ತಿಕೆರೆ, ಮೋಹನ್ ಕುಮಾರ್ ನಗರ, ಜೆ.ಪಿ. ಪಾರ್ಕ್, ಯಶವಂತಪುರ, ಎಚ್‌ಎಂಟಿ ಲೇಔಟ್, ಗೋಕುಲ 1ನೇ ಹಂತ, ಎಸ್‌ಬಿಎಂ ಕಾಲೋನಿ ಮತ್ತು ಸಂಜೀವಪ್ಪ ಕಾಲೋನಿ ಸೇರಿದಂತೆ ಹಲವು ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆ ಸ್ಥಗಿತಗೊಳ್ಳಲಿದೆ.

ಜೂನ್ 23ರಂದು ಕೋರಮಂಗಲ 3, 4, 5 ಮತ್ತು 6ನೇ ಬ್ಲಾಕ್, ಕೋರಮಂಗಲ ಕೈಗಾರಿಕಾ ಪ್ರದೇಶ, ಮಡಿವಾಳ, ವೆಂಕಟೇಶ್ವರ ಲೇಔಟ್, ಚಿಕ್ಕಡುಗೋಡಿ, ಜೋಗಿ ಕಾಲೋನಿ, ಆಡುಗೋಡಿ, ಬನ್ನೇರುಘಟ್ಟ ರಸ್ತೆ, ಕೆಎಚ್‌ಬಿ ಕಾಲೋನಿ, ಕಾವೇರಿ ಲೇಔಟ್, ಎಸ್.ಜಿ. ಪಾಳ್ಯ, ಮಡಿವಾಳ ಮಾರುಕಟ್ಟೆ, ಕೋರಮಂಗಲ ವಿಸ್ತರಣೆ ಹಾಗೂ ಜಕ್ಕಸಂದ್ರ ಸೇರಿದಂತೆ ಹಲವು ಪ್ರದೇಶಗಳಲ್ಲಿ ನಿಗದಿತ ವಿದ್ಯುತ್ ಕಡಿತ ಜಾರಿಯಲ್ಲಿರಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ.

ನಿಗದಿತ ಪ್ರದೇಶಗಳನ್ನು ಹೊರತುಪಡಿಸಿ ಇತರೆಡೆಗಳಲ್ಲಿ ತಾಂತ್ರಿಕ ಕಾರಣಗಳಿಂದ ವಿದ್ಯುತ್ ವ್ಯತ್ಯಯ ಉಂಟಾದಲ್ಲಿ ಸಾರ್ವಜನಿಕರು ಬೆಸ್ಕಾಂ ಮಿತ್ರ ಮೊಬೈಲ್ ಅಪ್ಲಿಕೇಶನ್ ಅಥವಾ 24 ಗಂಟೆಗಳ ಉಚಿತ ಸಹಾಯವಾಣಿ ಸಂಖ್ಯೆ 1912 ಗೆ ಕರೆ ಮಾಡಿ ದೂರು ದಾಖಲಿಸಬಹುದಾಗಿದೆ.

ವಿದ್ಯುತ್ ಕಡಿತದ ಅವಧಿಯಲ್ಲಿ ಅಗತ್ಯ ವಿದ್ಯುತ್ ಉಪಕರಣಗಳ ಬಳಕೆ, ನೀರು ಸಂಗ್ರಹಣೆ ಹಾಗೂ ಇತರೆ ಅಗತ್ಯ ಸಿದ್ಧತೆಗಳನ್ನು ಮುಂಚಿತವಾಗಿಯೇ ಮಾಡಿಕೊಂಡು ಸಹಕರಿಸುವಂತೆ ಬೆಸ್ಕಾಂ ಸಾರ್ವಜನಿಕರಿಗೆ ಮನವಿ ಮಾಡಿದೆ.

ದೇವಸ್ಥಾನದ ಮೆಟ್ಟಿಲು ಮುಟ್ಟಿ ಕಣ್ಣಿಗೆ ಒತ್ತಿಕೊಳ್ಳುವುದು ಯಾಕೆ? ಇಲ್ಲಿದೆ ರಹಸ್ಯ!

0

ಭಾರತೀಯ ಸಂಸ್ಕೃತಿಯಲ್ಲಿ ದೇವಸ್ಥಾನ ಪ್ರವೇಶಿಸುವಾಗ ಕೆಲವು ಸಂಪ್ರದಾಯಗಳನ್ನು ಪಾಲಿಸಲಾಗುತ್ತದೆ.

ಪಾದರಕ್ಷೆಗಳನ್ನು ಹೊರಗಿಡುವುದು, ಕೈಕಾಲು ತೊಳೆದುಕೊಳ್ಳುವುದು, ಕೆಲವಡೆ ತಲೆ ಮುಚ್ಚಿಕೊಳ್ಳುವುದು ಸೇರಿದಂತೆ ದೇವಸ್ಥಾನದ ಮೊದಲ ಮೆಟ್ಟಿಲನ್ನು ಮುಟ್ಟಿ ಕಣ್ಣಿಗೆ ಒತ್ತಿಕೊಳ್ಳುವ ಆಚರಣೆ ಕೂಡ ಪ್ರಮುಖವಾಗಿದೆ. ಈ ಸಂಪ್ರದಾಯವು ಕೇವಲ ಆಚರಣೆಯಲ್ಲ, ಅದರ ಹಿಂದೆ ಆಳವಾದ ಆಧ್ಯಾತ್ಮಿಕ ನಂಬಿಕೆ ಅಡಗಿದೆ.

ಹಿಂದೂ ಧರ್ಮದ ಪ್ರಕಾರ ದೇವಸ್ಥಾನವು ದೈವಿಕ ಶಕ್ತಿ ಮತ್ತು ಧನಾತ್ಮಕ ಕಂಪನಗಳಿಂದ ಕೂಡಿದ ಪವಿತ್ರ ಕ್ಷೇತ್ರವಾಗಿದೆ. ದೇವಸ್ಥಾನ ಪ್ರವೇಶಿಸುವ ಮುನ್ನ ಮೊದಲ ಮೆಟ್ಟಿಲಿಗೆ ನಮಸ್ಕರಿಸುವುದು ದೇವರ ಸನ್ನಿಧಿಗೆ ಗೌರವ ಸಲ್ಲಿಸುವ ಸಂಕೇತವೆಂದು ಪರಿಗಣಿಸಲಾಗುತ್ತದೆ.

ಧಾರ್ಮಿಕ ನಂಬಿಕೆಗಳ ಪ್ರಕಾರ ದೇವಸ್ಥಾನದ ಮೊದಲ ಮೆಟ್ಟಿಲು ಭಗವಂತನ ಪಾದಕ್ಕೆ ಸಮಾನವಾಗಿದೆ. ಹೀಗಾಗಿ ಅದನ್ನು ಸ್ಪರ್ಶಿಸಿ ಕಣ್ಣಿಗೆ ಒತ್ತಿಕೊಳ್ಳುವ ಮೂಲಕ ಭಕ್ತರು ದೈವಿಕ ಶಕ್ತಿಗೆ ಗೌರವ ಸಲ್ಲಿಸುತ್ತಾರೆ. ಜೊತೆಗೆ ತಮ್ಮೊಳಗಿನ ಅಹಂಕಾರ, ಕೋಪ, ಮತ್ಸರ ಮತ್ತು ನಕಾರಾತ್ಮಕ ಭಾವನೆಗಳನ್ನು ತ್ಯಜಿಸಿ ಶುದ್ಧ ಮನಸ್ಸಿನಿಂದ ದೇವರ ದರ್ಶನಕ್ಕೆ ಸಿದ್ಧರಾಗುತ್ತಾರೆ ಎಂಬ ನಂಬಿಕೆಯಿದೆ.

ಈ ಆಚರಣೆಯು ಸಂಪೂರ್ಣ ಶರಣಾಗತಿಯ ಸಂಕೇತವಾಗಿಯೂ ಪರಿಗಣಿಸಲಾಗುತ್ತದೆ. ದೇವರ ಮುಂದೆ ಎಲ್ಲರೂ ಸಮಾನರು ಎಂಬ ಭಾವನೆಯನ್ನು ಇದು ವ್ಯಕ್ತಪಡಿಸುತ್ತದೆ. ಆದ್ದರಿಂದ ಭಕ್ತರು ಮೆಟ್ಟಿಲಿಗೆ ನಮಸ್ಕರಿಸಿ ದೇವಾಲಯ ಪ್ರವೇಶಿಸುತ್ತಾರೆ.

ಇನ್ನು ದೇವಸ್ಥಾನದಲ್ಲಿ ದರ್ಶನ ಮುಗಿಸಿ ಹೊರಬಂದ ನಂತರ ಕೆಲಕಾಲ ಮೆಟ್ಟಿಲುಗಳ ಮೇಲೆ ಕುಳಿತುಕೊಳ್ಳುವ ಸಂಪ್ರದಾಯವೂ ಇದೆ. ಶಾಸ್ತ್ರಗಳ ಪ್ರಕಾರ ದೇವಸ್ಥಾನದ ಶಿಖರವನ್ನು ದೇವರ ಮುಖವೆಂದೂ, ಮೆಟ್ಟಿಲುಗಳನ್ನು ದೇವರ ಪಾದ ಕಮಲಗಳೆಂದೂ ಪರಿಗಣಿಸಲಾಗುತ್ತದೆ. ಹೀಗಾಗಿ ದೇವರ ದರ್ಶನದ ಬಳಿಕ ಮೆಟ್ಟಿಲುಗಳ ಮೇಲೆ ಕುಳಿತುಕೊಳ್ಳುವುದರಿಂದ ದೇವಸ್ಥಾನದ ಗರ್ಭಗುಡಿಯಿಂದ ಹೊರಹೊಮ್ಮುವ ಧನಾತ್ಮಕ ಶಕ್ತಿ ಮತ್ತು ದೈವಿಕ ತರಂಗಗಳು ದೇಹ ಹಾಗೂ ಮನಸ್ಸಿನ ಮೇಲೆ ಉತ್ತಮ ಪರಿಣಾಮ ಬೀರುತ್ತವೆ ಎಂಬ ನಂಬಿಕೆ ಇದೆ.

ಆದಾಗ್ಯೂ, ಇವು ಧಾರ್ಮಿಕ ನಂಬಿಕೆಗಳು ಮತ್ತು ಸಂಪ್ರದಾಯಗಳ ಆಧಾರದ ಮೇಲಿರುವ ಆಚರಣೆಗಳಾಗಿದ್ದು, ಅವುಗಳ ಆಧ್ಯಾತ್ಮಿಕ ಮಹತ್ವವನ್ನು ಭಕ್ತರು ತಮ್ಮ ನಂಬಿಕೆಗಳ ಪ್ರಕಾರ ಅನುಸರಿಸುತ್ತಾರೆ.

ಮದುವೆಗೆ ತೆರಳಿದ್ದ ಕುಟುಂಬಕ್ಕೆ ಶಾಕ್; ಮನೆಗೆ ಕನ್ನ ಹಾಕಿ ಚಿನ್ನಾಭರಣ, ನಗದು ದೋಚಿದ ಕಳ್ಳರು!

ಬೀದರ್: ಕುಟುಂಬದ ಸದಸ್ಯರೆಲ್ಲರೂ ಮದುವೆ ಸಮಾರಂಭಕ್ಕೆ ತೆರಳಿದ್ದ ವೇಳೆ ಮನೆಗೆ ನುಗ್ಗಿದ ಕಳ್ಳರು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ, ಬೆಳ್ಳಿ ಆಭರಣಗಳು ಹಾಗೂ ನಗದು ಕಳವು ಮಾಡಿ ಪರಾರಿಯಾದ ಘಟನೆ ಬೀದರ್ ತಾಲೂಕಿನ ಚಿದ್ರಿ ಗ್ರಾಮದಲ್ಲಿ ನಡೆದಿದೆ.

ಚಿದ್ರಿ ಗ್ರಾಮದ ರಾಜಕುಮಾರ ಬಿರಾದರ್ ಅವರ ನಿವಾಸದಲ್ಲಿ ಈ ಕಳ್ಳತನ ನಡೆದಿದ್ದು, ಮನೆಯವರು ಸಂಬಂಧಿಕರ ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಲು ತೆರಳಿದ್ದ ಸಮಯವನ್ನು ದುಷ್ಕರ್ಮಿಗಳು ಸದುಪಯೋಗಪಡಿಸಿಕೊಂಡಿದ್ದಾರೆ. ಮನೆ ಖಾಲಿ ಇರುವುದನ್ನು ಖಚಿತಪಡಿಸಿಕೊಂಡ ಕಳ್ಳರು ಬಾಗಿಲಿನ ಬೀಗ ಮುರಿದು ಒಳ ಪ್ರವೇಶಿಸಿ, ಮನೆಯಲ್ಲಿದ್ದ ಅಮೂಲ್ಯ ವಸ್ತುಗಳನ್ನು ದೋಚಿದ್ದಾರೆ.

ಕಳ್ಳರು ಸುಮಾರು 150 ಗ್ರಾಂ ಚಿನ್ನಾಭರಣ, 100 ಗ್ರಾಂ ಬೆಳ್ಳಿ ಆಭರಣಗಳು ಹಾಗೂ 1.50 ಲಕ್ಷ ರೂಪಾಯಿ ನಗದನ್ನು ಕಳವು ಮಾಡಿಕೊಂಡು ಪರಾರಿಯಾಗಿದ್ದಾರೆ. ಕಳುವಾದ ವಸ್ತುಗಳ ಒಟ್ಟು ಮೌಲ್ಯ 20 ಲಕ್ಷ ರೂಪಾಯಿಗೂ ಅಧಿಕ ಎಂದು ಅಂದಾಜಿಸಲಾಗಿದೆ.

ಮನೆಯವರು ಮಧ್ಯಾಹ್ನ ಮದುವೆ ಸಮಾರಂಭಕ್ಕೆ ತೆರಳಿದ್ದು, ರಾತ್ರಿ ಮನೆಗೆ ಮರಳಿದಾಗ ಬಾಗಿಲಿನ ಬೀಗ ಮುರಿದಿರುವುದು ಕಂಡುಬಂದಿದೆ. ಅನುಮಾನಗೊಂಡ ಅವರು ಮನೆಯೊಳಗೆ ಪರಿಶೀಲಿಸಿದಾಗ ಚಿನ್ನಾಭರಣ, ನಗದು ಕಳುವಾಗಿರುವುದು ಬೆಳಕಿಗೆ ಬಂದಿದೆ.

ಮಾಹಿತಿ ತಿಳಿಯುತ್ತಿದ್ದಂತೆ ಶ್ವಾನದಳ ಮತ್ತು ಬೆರಳಚ್ಚು ತಜ್ಞರ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಹಾಗೂ ಗಾಂಧಿಗಂಜ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ಕೈಗೊಂಡಿದ್ದಾರೆ.

ಈ ಸಂಬಂಧ ಗಾಂಧಿಗಂಜ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಳ್ಳರ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಗ್ರಾಮದಲ್ಲಿ ನಡೆದ ಈ ಕಳ್ಳತನ ಸ್ಥಳೀಯರಲ್ಲಿ ಆತಂಕಕ್ಕೆ ಕಾರಣವಾಗಿದೆ.

ಮಾವಿನ ಬೆಲೆ ಕುಸಿತಕ್ಕೆ ರೈತರ ಆಕ್ರೋಶ; ಬೆಂಬಲ ಬೆಲೆಗೆ ಆಗ್ರಹಿಸಿ ಇಂದು ಕೋಲಾರ ಬಂದ್!

ಕೋಲಾರ: ರಾಜ್ಯದ ಮಾವಿನ ತವರು ಎಂದೇ ಖ್ಯಾತಿ ಪಡೆದಿರುವ ಕೋಲಾರ ಜಿಲ್ಲೆಯಲ್ಲಿ ಮಾವಿನ ಸೀಸನ್ ಆರಂಭವಾಗುತ್ತಿದ್ದಂತೆಯೇ ಬೆಲೆ ಕುಸಿತ ಕಂಡಿರುವುದು ಬೆಳೆಗಾರರ ಆತಂಕಕ್ಕೆ ಕಾರಣವಾಗಿದೆ.

ಮಾವಿನ ಹಣ್ಣಿಗೆ ಬೆಂಬಲ ಬೆಲೆ ಘೋಷಿಸಬೇಕು ಅಥವಾ ಕನಿಷ್ಠ ಟನ್‌ಗೆ 10 ಸಾವಿರ ರೂಪಾಯಿ ನೀಡಬೇಕು ಎಂದು ಆಗ್ರಹಿಸಿ ಇಂದು ಕೋಲಾರ ಬಂದ್‌ಗೆ ಕರೆ ನೀಡಲಾಗಿದೆ.

ಕಳೆದೊಂದು ತಿಂಗಳಿನಿಂದ ಮಾವಿನ ಹಣ್ಣಿನ ಕೊಯ್ಲು ಆರಂಭವಾಗಿದ್ದರೂ, ಮಾರುಕಟ್ಟೆಯಲ್ಲಿ ನಿರೀಕ್ಷಿತ ಬೆಲೆ ಸಿಗದ ಕಾರಣ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಬಾರಿ ಬೇಸಿಗೆಯ ತೀವ್ರ ಬಿಸಿಲು ಹಾಗೂ ಕಳೆದ ತಿಂಗಳು ಸುರಿದ ಆಲಿಕಲ್ಲು ಸಹಿತ ಮಳೆಯಿಂದಾಗಿ ಮಾವಿನ ಬೆಳೆ ಭಾರೀ ಹಾನಿಗೊಳಗಾಗಿದೆ. ಸುಮಾರು 60ರಿಂದ 70 ಶೇಕಡಾ ಫಸಲು ನಾಶವಾಗಿದ್ದು, ಉಳಿದ ಬೆಳೆಗೂ ಸಮರ್ಪಕ ಬೆಲೆ ದೊರೆಯುತ್ತಿಲ್ಲ ಎಂದು ರೈತರು ಅಳಲು ತೋಡಿಕೊಂಡಿದ್ದಾರೆ.

ತೋತಾಪುರಿ, ಮಲಗೋವಾ, ಬೇನಿಷಾ, ರಸಪುರಿ, ಮಲ್ಲಿಕಾ ಸೇರಿದಂತೆ ವಿವಿಧ ತಳಿಯ ಮಾವಿನ ಹಣ್ಣುಗಳು ಮಾರುಕಟ್ಟೆಯಲ್ಲಿ ಕೆಜಿಗೆ 10 ರೂಪಾಯಿ ದಾಟದ ಸ್ಥಿತಿ ನಿರ್ಮಾಣವಾಗಿದೆ. ಉತ್ಪಾದನಾ ವೆಚ್ಚವೂ ವಾಪಸ್ ಸಿಗದ ಪರಿಸ್ಥಿತಿಯಲ್ಲಿ ರೈತರು ಸರ್ಕಾರದ ಮಧ್ಯಸ್ಥಿಕೆಗೆ ಒತ್ತಾಯಿಸಿದ್ದಾರೆ.

ಮಾವು ಬೆಳೆಗಾರರು ಟನ್‌ಗೆ ಕನಿಷ್ಠ 10 ಸಾವಿರ ರೂಪಾಯಿ ಬೆಂಬಲ ಬೆಲೆ ಘೋಷಿಸಬೇಕು. ಇಲ್ಲವಾದರೆ ನೇರವಾಗಿ ರೈತರ ನೆರವಿಗೆ ಧಾವಿಸಿ ಪರಿಹಾರ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ಜೊತೆಗೆ ಸ್ಥಳೀಯ ಮಟ್ಟದಲ್ಲಿ ಮಾವು ಸಂಸ್ಕರಣಾ ಘಟಕಗಳನ್ನು ಸ್ಥಾಪಿಸಿ ರೈತರಿಗೆ ಶಾಶ್ವತ ಪರಿಹಾರ ಒದಗಿಸಬೇಕು ಎಂಬ ಬೇಡಿಕೆಯನ್ನೂ ಮುಂದಿಟ್ಟಿದ್ದಾರೆ.

ಕೋಲಾರ ಜಿಲ್ಲೆಯಲ್ಲಿ ಸುಮಾರು 55 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಮಾವು ಬೆಳೆಯಲಾಗುತ್ತಿದ್ದು, ಅದರಲ್ಲೂ ಶ್ರೀನಿವಾಸಪುರ ತಾಲೂಕೊಂದರಲ್ಲೇ ಸುಮಾರು 45 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಮಾವಿನ ತೋಟಗಳಿವೆ. ಇಲ್ಲಿನ ಬಹುತೇಕ ರೈತರು ಮಾವಿನ ಬೆಳೆಯನ್ನೇ ಜೀವನಾಧಾರವಾಗಿಸಿಕೊಂಡಿದ್ದಾರೆ.

ಈ ಬಾರಿ ಪ್ರಕೃತಿ ವಿಕೋಪದಿಂದ ಬೆಳೆ ಹಾನಿಯಾಗಿರುವುದರ ಜೊತೆಗೆ ಮಾರುಕಟ್ಟೆಯಲ್ಲಿ ಬೆಲೆ ಕುಸಿತ ಕಂಡಿರುವುದರಿಂದ ರೈತರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೀಗಾಗಿ ಸರ್ಕಾರ ತಕ್ಷಣ ಮಧ್ಯಪ್ರವೇಶಿಸಿ ಬೆಂಬಲ ಬೆಲೆ ಘೋಷಿಸುವ ಮೂಲಕ ಮಾವು ಬೆಳೆಗಾರರ ನೆರವಿಗೆ ಬರಬೇಕು ಎಂದು ರೈತ ಸಂಘಟನೆಗಳು ಒತ್ತಾಯಿಸಿವೆ.

ಪ್ರಯಾಣಿಕರಿಗೆ ಮತ್ತೊಂದು ಶಾಕ್: ಬಸ್ ದರ ಹೆಚ್ಚಳಕ್ಕೆ ಸರ್ಕಾರದ ಮೊರೆ ಹೋದ ನಿಗಮಗಳು!

ಬೆಂಗಳೂರು: ಕಳೆದ ಜನವರಿಯಲ್ಲಿ ಶೇ.15ರಷ್ಟು ಬಸ್ ಟಿಕೆಟ್ ದರವನ್ನು ಹೆಚ್ಚಿಸಿದ್ದ ರಾಜ್ಯದ ನಾಲ್ಕು ಸಾರಿಗೆ ನಿಗಮಗಳು ಇದೀಗ ಮತ್ತೊಮ್ಮೆ ದರ ಏರಿಕೆಗೆ ಮುಂದಾಗಿವೆ.

ಡೀಸೆಲ್ ದರ ಏರಿಕೆ, ನೌಕರರ ವೇತನ ಭಾರ ಹಾಗೂ ವಿವಿಧ ಆರ್ಥಿಕ ಹೊರೆಗಳಿಂದ ಸಂಕಷ್ಟಕ್ಕೆ ಸಿಲುಕಿರುವ ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಟಿಕೆಟ್ ದರವನ್ನು ಶೇ.25ರಷ್ಟು ಹೆಚ್ಚಿಸಲು ಅನುಮತಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿವೆ.

ಜಾಗತಿಕ ಬೆಳವಣಿಗೆಗಳ ಪರಿಣಾಮ ದೇಶದಲ್ಲಿ ಡೀಸೆಲ್ ದರ ಪ್ರತಿ ಲೀಟರ್‌ಗೆ ಸುಮಾರು 8 ರೂಪಾಯಿಯಷ್ಟು ಹೆಚ್ಚಳವಾಗಿದ್ದು, ಇದರಿಂದ ಸಾರಿಗೆ ನಿಗಮಗಳ ವೆಚ್ಚ ಗಣನೀಯವಾಗಿ ಏರಿಕೆಯಾಗಿದೆ. ಇಂಧನ ದರ ಏರಿಕೆಯಿಂದ ಮಾತ್ರವೇ ಪ್ರತಿ ತಿಂಗಳು ಸುಮಾರು 40 ಕೋಟಿ ರೂಪಾಯಿಗಳಷ್ಟು ಹೆಚ್ಚುವರಿ ಹೊರೆ ನಿಗಮಗಳ ಮೇಲೆ ಬೀಳುತ್ತಿದ್ದು, ಇದೇ ಪರಿಸ್ಥಿತಿ ಮುಂದುವರಿದರೆ ವಾರ್ಷಿಕ ನಷ್ಟ 480 ಕೋಟಿ ರೂಪಾಯಿ ದಾಟುವ ಸಾಧ್ಯತೆ ಇದೆ ಎಂದು ನಿಗಮಗಳು ಸರ್ಕಾರದ ಗಮನಕ್ಕೆ ತಂದಿವೆ.

ಜುಲೈ ತಿಂಗಳಿನಿಂದ ಸಾರಿಗೆ ನೌಕರರಿಗೆ ಶೇ.12.5ರಷ್ಟು ವೇತನ ಹೆಚ್ಚಳ ಜಾರಿಗೆ ಬರಲಿದ್ದು, ಇದರಿಂದ ಆರ್ಥಿಕ ಹೊರೆ ಮತ್ತಷ್ಟು ಹೆಚ್ಚಾಗಲಿದೆ. ನೌಕರರಿಗೆ ಪಾವತಿಸಬೇಕಿರುವ ಒಟ್ಟು 1,271 ಕೋಟಿ ರೂಪಾಯಿಗಳ ವೇತನ ಬಾಕಿಯಲ್ಲಿ ಇದುವರೆಗೆ 450 ಕೋಟಿ ರೂಪಾಯಿ ಮಾತ್ರ ಬಿಡುಗಡೆಯಾಗಿದ್ದು, ಇನ್ನೂ 821 ಕೋಟಿ ರೂಪಾಯಿ ಪಾವತಿಸಬೇಕಿದೆ.

ಅಲ್ಲದೆ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯ ನೀಡುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರದಿಂದ ನಿಗಮಗಳಿಗೆ ಬರಬೇಕಿರುವ ಸುಮಾರು 5,000 ಕೋಟಿ ರೂಪಾಯಿಗಳ ಅನುದಾನ ಇನ್ನೂ ಬಿಡುಗಡೆಯಾಗಿಲ್ಲ. ಈ ಎಲ್ಲ ಕಾರಣಗಳಿಂದಾಗಿ ನಿಗಮಗಳ ಆರ್ಥಿಕ ಸ್ಥಿತಿ ಹದಗೆಟ್ಟಿದ್ದು, ದರ ಏರಿಕೆ ಅನಿವಾರ್ಯವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆದರೆ ದರ ಏರಿಕೆ ಪ್ರಸ್ತಾಪಕ್ಕೆ ಪ್ರಯಾಣಿಕರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಕಳೆದ ವರ್ಷವಷ್ಟೇ ಟಿಕೆಟ್ ದರ ಹೆಚ್ಚಿಸಲಾಗಿತ್ತು. ಈಗ ಮತ್ತೆ ದರ ಏರಿಕೆ ಮಾಡುವುದು ಸಾಮಾನ್ಯ ಜನರ ಮೇಲೆ ಹೆಚ್ಚುವರಿ ಹೊರೆ ಬೀರುವಂತಾಗುತ್ತದೆ ಎಂದು ಹಲವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇನ್ನೂ ಕೆಲ ಪ್ರಯಾಣಿಕರು, ಶಕ್ತಿ ಯೋಜನೆಯಡಿ ಸಂಪೂರ್ಣ ಉಚಿತ ಪ್ರಯಾಣ ನೀಡುವ ಬದಲು ಮಹಿಳಾ ಪ್ರಯಾಣಿಕರಿಂದ ಕನಿಷ್ಠ ಅರ್ಧದಷ್ಟು ದರ ವಸೂಲಿ ಮಾಡುವ ಮೂಲಕ ನಿಗಮಗಳ ಆರ್ಥಿಕ ಸಂಕಷ್ಟವನ್ನು ಕಡಿಮೆ ಮಾಡಬಹುದು ಎಂಬ ಸಲಹೆಯನ್ನೂ ನೀಡಿದ್ದಾರೆ.

ಸಾರಿಗೆ ನಿಗಮಗಳ ಮನವಿಗೆ ರಾಜ್ಯ ಸರ್ಕಾರ ಯಾವ ರೀತಿಯ ಪ್ರತಿಕ್ರಿಯೆ ನೀಡಲಿದೆ ಎಂಬುದು ಕುತೂಹಲ ಮೂಡಿಸಿದ್ದು, ಬಸ್ ಟಿಕೆಟ್ ದರ ಏರಿಕೆ ಕುರಿತು ಅಂತಿಮ ನಿರ್ಧಾರ ಮುಖ್ಯಮಂತ್ರಿಗಳ ಮಟ್ಟದಲ್ಲಿ ಕೈಗೊಳ್ಳಲಾಗುವ ಸಾಧ್ಯತೆ ಇದೆ.

ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಗೆ ಟೀಂ ಇಂಡಿಯಾ ಪ್ರಕಟ; 6 ಆಟಗಾರರಿಗೆ ಕೊಕ್

0

ಇಂಗ್ಲೆಂಡ್ ವಿರುದ್ಧ ನಡೆಯಲಿರುವ ಮೂರು ಪಂದ್ಯಗಳ ಏಕದಿನ ಸರಣಿಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ 15 ಸದಸ್ಯರ ಭಾರತ ತಂಡವನ್ನು ಪ್ರಕಟಿಸಿದೆ.

ಯುವ ಬ್ಯಾಟರ್ ಶುಭ್‌ಮನ್ ಗಿಲ್ ತಂಡವನ್ನು ಮುನ್ನಡೆಸಲಿದ್ದು, ಶ್ರೇಯಸ್ ಅಯ್ಯರ್ ಉಪನಾಯಕನಾಗಿ ಆಯ್ಕೆಯಾಗಿದ್ದಾರೆ.

2027ರ ಏಕದಿನ ವಿಶ್ವಕಪ್ ತಯಾರಿಯ ಭಾಗವಾಗಿ ಈ ಸರಣಿಯನ್ನು ಮಹತ್ವದ ಹೆಜ್ಜೆಯಾಗಿ ಪರಿಗಣಿಸಲಾಗುತ್ತಿದ್ದು, ಆಯ್ಕೆ ಸಮಿತಿಯು ಅನುಭವ ಮತ್ತು ಯುವ ಪ್ರತಿಭೆಗಳ ಸಮತೋಲನಕ್ಕೆ ಒತ್ತು ನೀಡಿದೆ. ಆದರೆ ಅಫ್ಘಾನಿಸ್ತಾನ ವಿರುದ್ಧದ ಸರಣಿಯಲ್ಲಿ ಅವಕಾಶ ಪಡೆದಿದ್ದ ಕೆಲ ಪ್ರಮುಖ ಆಟಗಾರರು ಈ ಬಾರಿ ತಂಡದಲ್ಲಿ ಸ್ಥಾನ ಪಡೆಯಲು ವಿಫಲರಾಗಿದ್ದಾರೆ.

ಅನುಭವಿ ಆಲ್‌ರೌಂಡರ್ ರವೀಂದ್ರ ಜಡೇಜಾ ಅವರನ್ನು ಈ ಬಾರಿ ಆಯ್ಕೆಗೆ ಪರಿಗಣಿಸಲಾಗಿಲ್ಲ. ಅವರ ಸ್ಥಾನದಲ್ಲಿ ವಾಷಿಂಗ್ಟನ್ ಸುಂದರ್‌ಗೆ ಅವಕಾಶ ನೀಡಲಾಗಿದೆ. ವೇಗಿ ಮೊಹಮ್ಮದ್ ಸಿರಾಜ್ ಅವರಿಗೆ ವಿಶ್ರಾಂತಿ ನೀಡಲಾಗಿದ್ದು, ಅವರ ಬದಲಿಗೆ ಯುವ ವೇಗಿ ಗುರ್ನೂರ್ ಬ್ರಾರ್ ತಂಡಕ್ಕೆ ಸೇರ್ಪಡೆಯಾಗಿದ್ದಾರೆ.

ಫಿಟ್ನೆಸ್ ಸಮಸ್ಯೆಯಿಂದ ಬಳಲುತ್ತಿರುವ ಹಾರ್ದಿಕ್ ಪಾಂಡ್ಯ ಕೂಡ ಈ ಸರಣಿಯಿಂದ ಹೊರಗುಳಿದಿದ್ದಾರೆ. ಅವರ ಸ್ಥಾನವನ್ನು ನಿತೀಶ್ ಕುಮಾರ್ ರೆಡ್ಡಿ ಉಳಿಸಿಕೊಂಡಿದ್ದಾರೆ. ಅಫ್ಘಾನಿಸ್ತಾನ ವಿರುದ್ಧದ ಸರಣಿಯ ಕೊನೆಯ ಪಂದ್ಯದಲ್ಲಿ ಶತಕ ಸಿಡಿಸಿದ್ದ ಯಶಸ್ವಿ ಜೈಸ್ವಾಲ್ ಕೂಡ ಈ ಬಾರಿ ಆಯ್ಕೆಯಾಗಿಲ್ಲ. ವಿರಾಟ್ ಕೊಹ್ಲಿಯ ಪುನರಾಗಮನದಿಂದಾಗಿ ಜೈಸ್ವಾಲ್‌ಗೆ ಅವಕಾಶ ಸಿಗಲಿಲ್ಲ ಎನ್ನಲಾಗಿದೆ.

ಅಫ್ಘಾನಿಸ್ತಾನ ವಿರುದ್ಧ ಏಕದಿನ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದ ಹರ್ಷ್ ದುಬೆ ಅವರನ್ನು ಕೈಬಿಡಲಾಗಿದ್ದು, ಅನುಭವಿ ಆಲ್‌ರೌಂಡರ್ ಅಕ್ಷರ್ ಪಟೇಲ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಯುವ ಆಟಗಾರ ಪ್ರಿನ್ಸ್ ಯಾದವ್ ಕೂಡ ತಂಡದಿಂದ ಹೊರಬಿದ್ದಿದ್ದು, ಹರ್ಷಿತ್ ರಾಣಾಗೆ ಅವಕಾಶ ಕಲ್ಪಿಸಲಾಗಿದೆ.

ಭಾರತದ ಏಕದಿನ ತಂಡ:
ಶುಭ್‌ಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್ (ಉಪನಾಯಕ), ಕೆಎಲ್ ರಾಹುಲ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ನಿತೀಶ್ ಕುಮಾರ್ ರೆಡ್ಡಿ, ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಪ್ರಸಿದ್ಧ್ ಕೃಷ್ಣ, ಹರ್ಷಿತ್ ರಾಣಾ, ಅರ್ಷದೀಪ್ ಸಿಂಗ್ ಹಾಗೂ ಗುರ್ನೂರ್ ಬ್ರಾರ್.

ರಾಜ್ಯದಲ್ಲಿ ಮತ್ತೆ ಚುರುಕಾದ ಮುಂಗಾರು; 13 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ಮುಂದಿನ ಕೆಲವು ದಿನಗಳ ಕಾಲ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಒಟ್ಟು 13 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಉಡುಪಿ, ದಕ್ಷಿಣ ಕನ್ನಡ, ಬೆಳಗಾವಿ, ಧಾರವಾಡ, ಹಾವೇರಿ, ಕೊಪ್ಪಳ, ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಶಿವಮೊಗ್ಗ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಗುಡುಗು ಮತ್ತು ಬಿರುಗಾಳಿಯೊಂದಿಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಹಾಗೂ ರೈತರು ಮುನ್ನೆಚ್ಚರಿಕೆ ವಹಿಸಿ ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆಯುವಂತೆ ಹವಾಮಾನ ಇಲಾಖೆ ಸೂಚಿಸಿದೆ.

ಕರಾವಳಿ ಜಿಲ್ಲೆಗಳಲ್ಲಿ ಮುಂಗಾರು ಮಾರುತಗಳ ಪ್ರಭಾವ ಹೆಚ್ಚಾಗಿದ್ದು, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕನ್ನಡ ಜಿಲ್ಲೆಯ ಬಹುತೇಕ ಭಾಗಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.

ಉತ್ತರ ಕರ್ನಾಟಕದ ಧಾರವಾಡ, ಹಾವೇರಿ, ಬೆಳಗಾವಿ ಹಾಗೂ ಕೊಪ್ಪಳ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಬಾಗಲಕೋಟೆ, ಬೀದರ್, ಗದಗ, ಕಲಬುರಗಿ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಮಲೆನಾಡು ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲೂ ಮಳೆಯ ವಾತಾವರಣ ಮುಂದುವರಿಯಲಿದೆ. ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಬಳ್ಳಾರಿ, ವಿಜಯನಗರ ಮತ್ತು ಚಿತ್ರದುರ್ಗ ಜಿಲ್ಲೆಗಳ ಕೆಲ ಭಾಗಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ.

ಇದೇ ವೇಳೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಹಾಗೂ ತುಮಕೂರು ಜಿಲ್ಲೆಗಳಲ್ಲಿ ತಂಪಾದ ಗಾಳಿಯೊಂದಿಗೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಸಾರ್ವಜನಿಕರು ಹವಾಮಾನ ಮುನ್ಸೂಚನೆಗಳನ್ನು ಗಮನಿಸಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಇಲಾಖೆ ಮನವಿ ಮಾಡಿದೆ.

ಉತ್ತರ ಕನ್ನಡದಲ್ಲಿ ಹಂದಿಜ್ವರಕ್ಕೆ ಮೊದಲ ಬಲಿ: ಆರೋಗ್ಯ ಇಲಾಖೆ ಕಟ್ಟೆಚ್ಚರ!

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಚವತ್ತಿ ಗ್ರಾಮದಲ್ಲಿ ಹಂದಿಜ್ವರ ಸೋಂಕಿಗೆ ವ್ಯಕ್ತಿಯೊಬ್ಬರು ಬಲಿಯಾಗಿರುವ ಘಟನೆ ವರದಿಯಾಗಿದೆ.

ಮೃತರನ್ನು ಚವತ್ತಿ ಗ್ರಾಮದ ರಾಜು ಮಂಜಗೌಡ (41) ಎಂದು ಗುರುತಿಸಲಾಗಿದೆ. ಜೂನ್ 8ರಂದು ಅಸ್ವಸ್ಥಗೊಂಡಿದ್ದ ಅವರನ್ನು ಯಲ್ಲಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗೆ ಶಿರಸಿಯ ಮಾರಿಕಾಂಬಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದಾಗ್ಯೂ ಆರೋಗ್ಯ ಸ್ಥಿತಿ ಗಂಭೀರಗೊಂಡ ಹಿನ್ನೆಲೆಯಲ್ಲಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಘಟನೆಯು ಯಲ್ಲಾಪುರ ಭಾಗದಲ್ಲಿ ಆತಂಕಕ್ಕೆ ಕಾರಣವಾಗಿದ್ದು, ಆರೋಗ್ಯ ಇಲಾಖೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ. ಸಾರ್ವಜನಿಕರು ಜ್ವರ, ಕೆಮ್ಮು, ನೆಗಡಿ, ಮೈಕೈ ನೋವು, ಗಂಟಲು ನೋವು, ಉಸಿರಾಟದ ತೊಂದರೆ ಅಥವಾ ಅತಿಯಾದ ಸುಸ್ತು ಕಾಣಿಸಿಕೊಂಡಲ್ಲಿ ತಕ್ಷಣವೇ ಸಮೀಪದ ಸರ್ಕಾರಿ ಅಥವಾ ತಾಲೂಕು ಆಸ್ಪತ್ರೆಗೆ ಭೇಟಿ ನೀಡಿ ತಪಾಸಣೆ ಹಾಗೂ ಚಿಕಿತ್ಸೆ ಪಡೆಯುವಂತೆ ಇಲಾಖೆ ಮನವಿ ಮಾಡಿದೆ.

ತೀವ್ರ ಉಸಿರಾಟದ ತೊಂದರೆ, ಎದೆನೋವು, ನಿರ್ಜಲೀಕರಣ ಅಥವಾ ಗೊಂದಲದಂತಹ ಲಕ್ಷಣಗಳು ಕಂಡುಬಂದರೆ ತುರ್ತು ಚಿಕಿತ್ಸೆ ಪಡೆಯುವುದು ಅಗತ್ಯ ಎಂದು ವೈದ್ಯರು ತಿಳಿಸಿದ್ದಾರೆ.

ಹಂದಿಜ್ವರವು ಹೆಚ್1ಎನ್1 ವೈರಸ್‌ನಿಂದ ಉಂಟಾಗುವ ಸೋಂಕು ಕಾಯಿಲೆಯಾಗಿದ್ದು, ಸೋಂಕಿತ ವ್ಯಕ್ತಿ ಕೆಮ್ಮಿದಾಗ ಅಥವಾ ಸೀನಿದಾಗ ಗಾಳಿಯ ಮೂಲಕ ಹರಡುತ್ತದೆ. ಅಲ್ಲದೆ ವೈರಸ್ ತಗುಲಿರುವ ವಸ್ತುಗಳನ್ನು ಮುಟ್ಟಿದ ಬಳಿಕ ಕಣ್ಣು, ಮೂಗು ಅಥವಾ ಬಾಯಿಯನ್ನು ಸ್ಪರ್ಶಿಸುವುದರಿಂದಲೂ ಸೋಂಕು ಹರಡುವ ಸಾಧ್ಯತೆ ಇದೆ.

ಆದ್ದರಿಂದ ವೈಯಕ್ತಿಕ ಸ್ವಚ್ಛತೆ ಕಾಪಾಡುವುದು, ಕೆಮ್ಮು-ಸೀನುವ ವೇಳೆ ಮುನ್ನೆಚ್ಚರಿಕೆ ವಹಿಸುವುದು ಹಾಗೂ ಆರೋಗ್ಯ ಸಮಸ್ಯೆಗಳು ಕಂಡುಬಂದ ತಕ್ಷಣ ವೈದ್ಯರನ್ನು ಸಂಪರ್ಕಿಸುವ ಮೂಲಕ ಹೆಚ್1ಎನ್1 ಸೋಂಕಿನಿಂದ ದೂರ ಉಳಿಯಬಹುದಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

error: Content is protected !!