Home Blog

ತಿಮ್ಮಾಪೂರಲ್ಲಿ ಕುಡಿಯುವ ನೀರಿಗೆ ಹಾಹಾಕಾರ- ಜೆಜೆಎಂ ಯೋಜನೆ ವೈಫಲ್ಯ..! ವಾರಕ್ಕೊಮ್ಮೆ ನೀರು?

0

ಗದಗ:- ತಾಲೂಕಿನ ತಿಮ್ಮಾಪೂರ ಗ್ರಾಮದಲ್ಲಿ ಕುಡಿಯುವ ನೀರಿಗೆ ಪ್ರಮುಖ ಆಧಾರವಾಗಿದ್ದ ಕೆರೆ ಸಂಪೂರ್ಣ ಬತ್ತಿಹೋಗಿದ್ದು, ಗ್ರಾಮ ಪಂಚಾಯಿತಿ ನಿರ್ಲಕ್ಷ್ಯದಿಂದ ಗ್ರಾಮಸ್ಥರು ತೀವ್ರ ನೀರಿನ ಸಂಕಷ್ಟಕ್ಕೆ ಸಿಲುಕಿದ್ದಾರೆ.

ಬೇಸಿಗೆಯ ತಾಪಮಾನ ಹೆಚ್ಚಾಗುತ್ತಿದ್ದಂತೆ ಸಮಸ್ಯೆ ಮತ್ತಷ್ಟು ಗಂಭೀರ ಸ್ವರೂಪ ಪಡೆದುಕೊಂಡಿದೆ. ಗ್ರಾಮಕ್ಕೆ ಕುಡಿಯುವ ನೀರು ಒದಗಿಸಲು ಜಾರಿಗೆ ತಂದ ಬಹುಗ್ರಾಮ ಕುಡಿಯುವ ನೀರಿನ ಯೋಜನೆ (ಜೆಜೆಎಂ) ಅಡಿಯಲ್ಲಿ ತುಂಗಭದ್ರಾ ನದಿಯಿಂದ ನೀರು ಸರಬರಾಜು ಮಾಡುವ ವ್ಯವಸ್ಥೆ ಸಮರ್ಪಕವಾಗಿ ಕಾರ್ಯನಿರ್ವಹಿಸದೆ, ವಾರಕ್ಕೊಮ್ಮೆ ಮಾತ್ರ ನೀರು ಪೂರೈಕೆ ಆಗುತ್ತಿದೆ. ಇದರಿಂದ ಮೂರು ವಾರ್ಡುಗಳ ಗ್ರಾಮಕ್ಕೆ ಸಿಗುವ ನೀರು ಅತ್ಯಲ್ಪವಾಗಿದ್ದು, ಮನೆ ಬಳಕೆಗೂ ಹಾಗೂ ಪಶುಗಳಿಗೆ ಸಾಕಾಗುತ್ತಿಲ್ಲ.

ಗ್ರಾಮಸ್ಥರು ಹಾಗೂ ಮಹಿಳೆಯರು ಹಲವು ಬಾರಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶಿವಲೀಲಾ ಗೂಳಪ್ಪ ಅವರ ಗಮನಕ್ಕೆ ಸಮಸ್ಯೆಯನ್ನು ತಂದರೂ ಯಾವುದೇ ಸ್ಪಷ್ಟ ಕ್ರಮ ಕೈಗೊಳ್ಳಲಾಗಿಲ್ಲ ಎಂದು ಆರೋಪಿಸಿದ್ದಾರೆ. ಅಧಿಕಾರಿಗಳಿಂದ ಕೇವಲ ಭರವಸೆ ಮಾತುಗಳಷ್ಟೇ ಸಿಗುತ್ತಿವೆ ಎಂದು ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಟ್ಯಾಂಕರ್ ಅವಲಂಬನೆ—ಬಡವರಿಗೆ ಭಾರ:

ಗ್ರಾಮದಲ್ಲಿ ಬೇರೆ ನೀರಿನ ಮೂಲಗಳಿಲ್ಲದ ಕಾರಣ ಜನರು ಖಾಸಗಿ ಟ್ಯಾಂಕರ್ ಮೂಲಕ ಸುಮಾರು ₹1500 ವೆಚ್ಚದಲ್ಲಿ ನೀರು ತರಿಸಿಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಇದು ಬಡ ಹಾಗೂ ಮಧ್ಯಮ ವರ್ಗದ ಕುಟುಂಬಗಳಿಗೆ ದೊಡ್ಡ ಹೊರೆ ಆಗಿದ್ದು, ಕುಡಿಯುವ ನೀರೇ ದುಬಾರಿ ವಸ್ತುವಾಗಿ ಪರಿಣಮಿಸಿದೆ.

ಸರ್ಕಾರದ ಆದೇಶಕ್ಕೂ ಸ್ಪಂದನೆ ಇಲ್ಲ:

ರಾಜ್ಯ ಸರ್ಕಾರ ಗ್ರಾಮೀಣ ಪ್ರದೇಶಗಳಲ್ಲಿ ನೀರಿನ ಕೊರತೆ ತಡೆಗಟ್ಟಲು ಕೋಟ್ಯಾಂತರ ರೂಪಾಯಿ ಮೀಸಲಿಟ್ಟಿದ್ದರೂ, ತಿಮ್ಮಾಪೂರ ಸೇರಿದಂತೆ ಹಲವೆಡೆ ಸಮಸ್ಯೆ ಮುಂದುವರಿದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀರಿನ ಸಮಸ್ಯೆ ಕುರಿತು ಜಿಲ್ಲಾಧಿಕಾರಿಗಳನ್ನು ನೇರ ಹೊಣೆಗಾರರನ್ನಾಗಿ ಮಾಡುವಂತೆ ಸೂಚನೆ ನೀಡಿದ್ದರೂ, ಸ್ಥಳೀಯ ಮಟ್ಟದಲ್ಲಿ ಪರಿಣಾಮಕಾರಿ ಕ್ರಮ ಕಾಣಿಸುತ್ತಿಲ್ಲ.

ಒಟ್ಟಾರೆ ಈ ಸಮಸ್ಯೆ ಇದೇ ರೀತಿಯಲ್ಲಿ ಮುಂದುವರಿದರೆ ಗ್ರಾಮಸ್ಥರ ಆಕ್ರೋಶ ತೀವ್ರವಾಗಲಿದೆ ಎಂದು ರೈತ ಸಂಘದ ಜಿಲ್ಲಾ ಅಧ್ಯಕ್ಷ ಯಲ್ಲಪ್ಪ ಎಚ್. ಬಾಬರಿ, ಹುಚ್ಚೀರಪ್ಪ ಜೋಗಿನ, ಶರಣಪ್ಪ ಜೋಗಿನ, ಬಾಳಪ್ಪ ಗಂಗರಾತ್ರಿ, ಹನುಮಪ್ಪ ತಳವಾರ, ಕಪತ್ತಪ್ಪ ಸೊಂಪೂರ, ರಾಯಣ್ಣ ಕಂಡ್ರಿ, ಗೀರಿಶ ಗುಡ್ಲಾನೂರ ಸೇರಿದಂತೆ ಹಲವರು ಎಚ್ಚರಿಕೆ ನೀಡಿದ್ದಾರೆ.

2 ಗ್ರಾಮ ಪಂಚಾಯತಿಗಳ ಜವಾಬ್ದಾರಿ: ಕೆಲಸದ ಒತ್ತಡ ಹೆಚ್ಚಾಗಿ ಆತ್ಮಹತ್ಯೆ ಮಾಡಿಕೊಂಡ್ರಾ PDO!?

0

ಗದಗ:- ಜಿಲ್ಲೆಯ ರೋಣ ಪಟ್ಟಣದಲ್ಲಿ ಪಿಡಿಒ ಮಕ್ತುಂ ಹುಸೇನ್ ಕರಡಿಗುಡ್ಡ (46) ಅವರು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಗುರುವಾರ ಬೆಳಗಿನ ಜಾವ ಬೆಳಕಿಗೆ ಬಂದಿದೆ.

ಪಟ್ಟಣದ ಶ್ರೀನಗರದಲ್ಲಿನ ಬಾಡಿಗೆ ಮನೆಯಲ್ಲಿ ನೇಣು ಬಿಗಿದುಕೊಂಡು ಅವರು ಜೀವನ ಅಂತ್ಯಗೊಳಿಸಿಕೊಂಡಿದ್ದಾರೆ. ಮೂಲತಃ ಧಾರವಾಡದವರಾದ ಮಕ್ತುಂ ಹುಸೇನ್ ಅವರು ಎರಡು ತಿಂಗಳ ಹಿಂದೆ ರೋಣ ತಾಲೂಕಿನಲ್ಲಿ ಪಿಡಿಒ ಆಗಿ ಸೇವೆ ಆರಂಭಿಸಿದ್ದರು. ತಾಲೂಕಿನ ಅಸೂಟಿ ಹಾಗೂ ಕೊತಬಾಳ ಗ್ರಾಮ ಪಂಚಾಯತಿಗಳ ಅಭಿವೃದ್ಧಿ ಅಧಿಕಾರಿಯಾಗಿ ಅವರನ್ನು ನಿಯೋಜಿಸಲಾಗಿತ್ತು. ಪಿಡಿಒಗಳ ಕೊರತೆಯಿಂದಾಗಿ ಎರಡು ಗ್ರಾಮ ಪಂಚಾಯತಿಗಳ ಹೊಣೆಗಾರಿಕೆಯನ್ನು ವಹಿಸಿಕೊಂಡಿದ್ದ ಅವರು ಕೆಲಸದ ಒತ್ತಡದಿಂದ ಬಳಲುತ್ತಿದ್ದರು ಎನ್ನಲಾಗಿದೆ.

ಇದಲ್ಲದೆ, 2021ರಿಂದ 2023ರ ಅವಧಿಗೆ ಸಂಬಂಧಿಸಿದಂತೆ ಅವರ ಮೇಲೆ ಲೋಕಾಯುಕ್ತ ಪ್ರಕರಣ ದಾಖಲಾಗಿತ್ತು ಎಂದು ತಿಳಿದು ಬಂದಿದೆ. ಕೊತಬಾಳ ಗ್ರಾಮ ಪಂಚಾಯತಿಯಲ್ಲಿ ನರೇಗಾ ಸಂಬಂಧಿತ ಪ್ರಕರಣವೂ ಇದ್ದು, “ಯಾರೋ ಮಾಡಿದ ತಪ್ಪಿಗೆ ನಾವು ಬೆಂಗಳೂರಿಗೆ ಅಲೆದಾಡಬೇಕಾಗಿದೆ” ಎಂದು ಅವರು ತಮ್ಮ ಆಪ್ತರ ಬಳಿ ಅಸಮಾಧಾನ ವ್ಯಕ್ತಪಡಿಸಿದ್ದಾಗಿ ತಿಳಿದು ಬಂದಿದೆ.

ಮೃತರ ಪತ್ನಿ ಆಸ್ಮಾಬಾನು ಅವರು ಮಾಧ್ಯಮಗಳಿಗೆ ನೀಡಿದ ಮಾಹಿತಿಯಂತೆ, “ಎರಡು ಗ್ರಾಮ ಪಂಚಾಯತಿಗಳ ಕೆಲಸ ನಿರ್ವಹಿಸಲು ಕಷ್ಟವಾಗುತ್ತಿದೆ ಎಂದು ಅವರು ಆಗಾಗ ಹೇಳುತ್ತಿದ್ದರು. ಒಂದೇ ಗ್ರಾಮ ಪಂಚಾಯತಿಯಲ್ಲಿ ಕೆಲಸ ಮಾಡಲು ಅವಕಾಶ ಸಿಗಬಹುದು ಎಂದು ತಾಪಂ ಇಒ ತಿಳಿಸಿದ್ದಾರೆ ಎಂದು ಹೇಳಿದರು. ಮಂಗಳವಾರ ರಾತ್ರಿ ಮಾತನಾಡಿ ‘ಸುಸ್ತಾಗಿದ್ದೇನೆ, ಮತ್ತೆ ಕರೆ ಮಾಡಬೇಡಿ’ ಎಂದಿದ್ದರು. ನಂತರ ಕರೆ ಮಾಡಿದರೂ ಸ್ವೀಕರಿಸಲಿಲ್ಲ. ಮನೆಯ ಮಾಲೀಕರಿಗೆ ತಿಳಿಸಿದಾಗ ಘಟನೆ ತಿಳಿಯಿತು” ಎಂದು ತಿಳಿಸಿದ್ದಾರೆ.

ಈ ಸಂಬಂಧ ರೋಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

ರೋಣ ತಾಲೂಕು ಪಂಚಾಯತ್ ಇಒ ಚಂದ್ರಶೇಖರ್ ಕಂದಕೂರ ಮಾತನಾಡಿ,“ಅಸೂಟಿ ಗ್ರಾಮ ಪಂಚಾಯತ್ ಸಮಸ್ಯೆ ಬಗ್ಗೆ ನನ್ನ ಗಮನಕ್ಕೆ ತಂದಿದ್ದರು. ನಾನು ಸಹ ಅವರಿಗೆ ಧೈರ್ಯ ನೀಡಿ, ಸ್ವತಃ ಅಲ್ಲಿಗೆ ತೆರಳಿ ಸಮಸ್ಯೆ ಬಗೆಹರಿಸಿದ್ದೆ. ಅಲ್ಲದೆ ಗ್ರಾಪಂ ಬದಲಾಯಿಸುವ ಬಗ್ಗೆಗೂ ತಿಳಿಸಿದ್ದೆ. ‘ಚಿಕ್ಕ ಮಕ್ಕಳು ಇದ್ದಾರೆ ಸರ್, ಶಾಲೆ ಆರಂಭವಾದ ತಕ್ಷಣ ಇಲ್ಲಿಯೇ ಶಾಲೆಗೆ ಸೇರಿಸುತ್ತೇನೆ’ ಎಂದು ಹೇಳಿದ್ದರು. ಆದರೆ ಅವರು ಹೀಗೆ ಮಾಡಿಕೊಂಡಿರುವುದು ನನಗೆ ಅರ್ಥವಾಗುತ್ತಿಲ್ಲ ಎಂದಿದ್ದಾರೆ.

ಪಿಎಸ್ಐ ಪ್ರಕಾಶ ಬಣಕಾರ ಮಾತನಾಡಿ, ಸಿಪಿಐ ಸಾಹೇಬರು ಹಾಗೂ ನಾನು ಸ್ಥಳಕ್ಕೆ ಭೇಟಿ ನೀಡಿದ್ದೇವೆ. ನಮ್ಮ ವಿಶೇಷ ತನಿಖಾ ತಂಡವೂ ಆಗಮಿಸಿದೆ. ಮುಂದಿನ ಕ್ರಮಗಳ ಕುರಿತು ನಂತರ ಹೆಚ್ಚಿನ ಮಾಹಿತಿಯನ್ನು ನೀಡಲಾಗುವುದು ಎಂದರು.

ಹಗರಿಬೊಮ್ಮನಹಳ್ಳಿ ಪುರಸಭೆ ಗದ್ದುಗೆ ಕಾಂಗ್ರೆಸ್ ಕೈಗೆ: ರಾಜಕೀಯ ಲೆಕ್ಕಾಚಾರ ಬದಲಿಸಿದ ಫಲಿತಾಂಶ!

0

ಹಗರಿಬೊಮ್ಮನಹಳ್ಳಿ:- ತೀವ್ರ ಕುತೂಹಲ ಕೆರಳಿಸಿದ್ದ ಪುರಸಭೆ ಅಧ್ಯಕ್ಷರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಮೇಲುಗೈ ಸಾಧಿಸಿದ್ದು, ರೇಷ್ಮಾ ಸಿಕಂದರ್ ಅವರು ಭರ್ಜರಿ ಜಯ ಸಾಧಿಸಿ ಅಧ್ಯಕ್ಷೆಯಾಗಿ ಆಯ್ಕೆಯಾಗಿದ್ದಾರೆ.

ಪುರಸಭೆ ಕಚೇರಿಯಲ್ಲಿ ಗುರುವಾರ ಬೆಳಿಗ್ಗೆ 10 ಗಂಟೆಯಿಂದಲೇ ರಾಜಕೀಯ ಚಟುವಟಿಕೆಗಳು ಚುರುಕುಗೊಂಡಿದ್ದವು. ಬಿಸಿಲಿನ ತಾಪವನ್ನೂ ಲೆಕ್ಕಿಸದೆ ಸಾರ್ವಜನಿಕರು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದರು. ನಾಮಪತ್ರ ಸಲ್ಲಿಕೆ ಸ್ವಲ್ಪ ತಡವಾಗಿ ನಡೆದರೂ, ಬಿಜೆಪಿ ಪರವಾಗಿ ಸುರೇಶ್ ಬಣಕಾರ ಹಾಗೂ ಕಾಂಗ್ರೆಸ್ ಪರವಾಗಿ ರೇಷ್ಮಾ ಸಿಕಂದರ್ ಸ್ಪರ್ಧಿಸಿದರು.

ಚುನಾವಣೆಯಲ್ಲಿ ಬಿಜೆಪಿ ಪರ 11 ಸದಸ್ಯರಲ್ಲಿ 8 ಮಂದಿ ಮಾತ್ರ ಭಾಗವಹಿಸಿದ್ದು, ಶಾಸಕರ ಒಂದು ಮತ ಸೇರಿ ಒಟ್ಟು 9 ಮತಗಳು ಲಭಿಸಿವೆ. ಕಾಂಗ್ರೆಸ್‌ನ 12 ಸದಸ್ಯರು ಹಾಗೂ ಸಂಸದ ಈ. ತುಕಾರಾಂ ಅವರ ಮತ ಸೇರಿ ರೇಷ್ಮಾ ಸಿಕಂದರ್ ಅವರಿಗೆ 13 ಮತಗಳು ಲಭಿಸಿ ಸ್ಪಷ್ಟ ಬಹುಮತದೊಂದಿಗೆ ಜಯ ಸಾಧಿಸಿದರು.

ಸಹಾಯಕ ಆಯುಕ್ತರು ಅಧಿಕೃತವಾಗಿ ಫಲಿತಾಂಶ ಘೋಷಿಸುತ್ತಿದ್ದಂತೆ ಕಾಂಗ್ರೆಸ್ ಪಾಳಯದಲ್ಲಿ ಸಂಭ್ರಮ ಮುಗಿಲು ಮುಟ್ಟಿತು. ಪಟಾಕಿ ಸಿಡಿಸಿ, ಘೋಷಣೆಗಳನ್ನು ಕೂಗಿ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು.

ಅಧ್ಯಕ್ಷೆಯಾಗಿ ಆಯ್ಕೆಯಾದ ನಂತರ ರೇಷ್ಮಾ ಸಿಕಂದರ್ ಅವರು ಜಗಜ್ಯೋತಿ ಬಸವಣ್ಣನವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಆಶೀರ್ವಾದ ಪಡೆದರು.

ಉಪಾಧ್ಯಕ್ಷರಾದ ನೇತ್ರಾವತಿ ಹುಚ್ಚಪ್ಪ ಸೇರಿದಂತೆ ಪವಾಡಿ ಹನುಮಂತಪ್ಪ, ಮರಿ ರಾಮಪ್ಪ, ಗಣೇಶ್, ರಾಜೇಶ್ ಬ್ಯಾಡಗಿ, ಅಜೀಜುಲ್ಲಾ, ಖಾಜಾ ಬನ್ನಿ ಅಲ್ಲಾಭಕ್ಷಿ, ಗುಂಡ್ಲು ಸರಸ್ವತಿ, ಮಂಜುಳಾ ಕೃಷ್ಣ ನಾಯ್ಕ, ಅಂಬಿಕಾ ದೇವಿಂದ್ರಪ್ಪ, ಇಸ್ಮಾಯಿಲ್ ಸಾಬ್, ಜೋಗಿ ಹನುಮಂತಪ್ಪ, ಕೆ.ಎಂ. ನವೀನ್ ಕುಮಾರ್, ದೀಪಕ್ ಕಠಾರೆ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಬಿಜೆಪಿ ಸದಸ್ಯರಾದ ಮಲ್ಲೇಶ್ವರಿ ಭರತ್, ಎಚ್.ಎಂ. ಚೆನ್ನಮ್ಮ ವಿಜಯಕುಮಾರ್, ಭೋವಿ ವೀರೇಶ್ ಗೈರಾಗಿದ್ದರು.

ಹಗರಿಬೊಮ್ಮನಹಳ್ಳಿ ಪುರಸಭೆಯಲ್ಲಿ ಕಾಂಗ್ರೆಸ್ ಗೆಲುವು ಸ್ಥಳೀಯ ರಾಜಕೀಯದಲ್ಲಿ ಮಹತ್ವದ ಬದಲಾವಣೆಗೆ ನಾಂದಿ ಹಾಡಿದ್ದು, ಮುಂದಿನ ದಿನಗಳಲ್ಲಿ ಅಭಿವೃದ್ಧಿ ರಾಜಕಾರಣಕ್ಕೆ ವೇದಿಕೆ ಸಿದ್ಧವಾಗಿದೆ ಎಂಬ ಸಂದೇಶ ನೀಡಿದೆ.

ಈ ಬಗ್ಗೆ ಸಂಸದ ಈ. ತುಕಾರಾಂ ಮಾತನಾಡಿ, ಕಾಂಗ್ರೆಸ್ ಪಕ್ಷ ಯಾವಾಗಲೂ ಮಾತಿಗಿಂತ ಕೃತಿಗೆ ಆದ್ಯತೆ ನೀಡುತ್ತದೆ. ನಮ್ಮ ಪಕ್ಷ ತನ್ನದೇ ಆದ ಧ್ಯೇಯೋದ್ದೇಶಗಳಂತೆ ನಡೆದುಕೊಳ್ಳುತ್ತದೆ ಎಂದರು.

ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಡಾ. ಸಾಹಿರಾಬಾನು ಮಾತನಾಡಿ, “ಕಾಂಗ್ರೆಸ್ ಪಕ್ಷ ಮಹಿಳೆಯರ ಪರವಾಗಿದೆ ಎಂಬುದನ್ನು ಮತ್ತೆ ಸಾಬೀತುಪಡಿಸಿದೆ. ರೇಷ್ಮಾ ಸಿಕಂದರ್ ಅಧ್ಯಕ್ಷೆಯಾಗಲು ಸಂಸದ ತುಕಾರಾಂ ಮತ್ತು ಭೀಮಾನಾಯ್ಕ ಅವರ ಪಾತ್ರ ಮಹತ್ತರವಾಗಿದೆ ಎಂದರು.

ನೂತನ ಅಧ್ಯಕ್ಷೆ ರೇಷ್ಮಾ ಸಿಕಂದರ್ ಮಾತನಾಡಿ, “ನನ್ನನ್ನು ಅಧ್ಯಕ್ಷೆಯನ್ನಾಗಿ ಆಯ್ಕೆ ಮಾಡಿದ ಎಲ್ಲಾ ಸದಸ್ಯರಿಗೆ, ಸಂಸದರು ಹಾಗೂ ಭೀಮಾನಾಯ್ಕ ಅವರಿಗೆ ನಾನು ಚಿರಋಣಿ. ಪುರಸಭೆಯ ಎಲ್ಲಾ ವಾರ್ಡ್‌ಗಳ ಸಮಗ್ರ ಅಭಿವೃದ್ಧಿಗೆ ಶ್ರಮಿಸುತ್ತೇನೆ ಎಂದರು.

ಎಂ.ಬಿ.ಎ.ಯಲ್ಲಿ ಪ್ರಥಮ ರ‍್ಯಾಂಕ್: ವಾಣಿಶ್ರೀ ಕಲಬುರ್ಗಿಗೆ 5 ಚಿನ್ನದ ಪದಕಗಳು!

0

ಗದಗ: ಕರ್ನಾಟಕ ವಿಶ್ವವಿದ್ಯಾಲಯದ ಪಿ.ಜಿ ಸೆಂಟರ್ ವಿದ್ಯಾರ್ಥಿನಿ ವಾಣಿಶ್ರೀ ಕಲಬುರ್ಗಿ ಅವರು ಎಂ.ಬಿ.ಎ (ನಿರ್ವಹಣಾ ಅಧ್ಯಯನ) ವಿಭಾಗದಲ್ಲಿ ಪ್ರಥಮ ರ‍್ಯಾಂಕ್ ಪಡೆದು ಐದು ಚಿನ್ನದ ಪದಕಗಳನ್ನು ಗಳಿಸುವ ಮೂಲಕ ಅಪರೂಪದ ಸಾಧನೆ ಮಾಡಿದ್ದಾರೆ.

ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ 75ನೇ ವಾರ್ಷಿಕ ಘಟಿಕೋತ್ಸವದಲ್ಲಿ ಈ ಗೌರವವನ್ನು ರಾಜ್ಯಪಾಲ ಥಾವರ ಚಂದ್ ಗೆಹ್ಲೋಟ್ ಅವರು ಪ್ರದಾನ ಮಾಡಿದರು. ಗಾಂಧಿ ಭವನದಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ಗಣ್ಯರು, ಪ್ರಾಧ್ಯಾಪಕರು ಹಾಗೂ ಪೋಷಕರ ಸಮ್ಮುಖದಲ್ಲಿ ವಿದ್ಯಾರ್ಥಿನಿಯನ್ನು ಸನ್ಮಾನಿಸಲಾಯಿತು.

ನಿರಂತರ ಪರಿಶ್ರಮ, ಶಿಸ್ತು ಮತ್ತು ವಿದ್ಯಾಭ್ಯಾಸದ ಮೇಲಿನ ಬದ್ಧತೆಯಿಂದ ಈ ಸಾಧನೆ ಮಾಡಿದ ವಾಣಿಶ್ರೀ ಅವರು ಗದಗ ಜಿಲ್ಲೆಗೆ ಹೆಮ್ಮೆ ತಂದಿದ್ದಾರೆ. ಐದು ಚಿನ್ನದ ಪದಕಗಳನ್ನು ಒಂದೇ ಬಾರಿ ಪಡೆಯುವುದು ಅಪರೂಪದ ಸಾಧನೆಯಾಗಿದ್ದು, ಅವರ ಪ್ರತಿಭೆಯನ್ನು ಸ್ಪಷ್ಟವಾಗಿ ತೋರಿಸುತ್ತದೆ.

ಈ ಸಂದರ್ಭದಲ್ಲಿ ವಾಣಿಶ್ರೀ ಅವರು ತಮ್ಮ ಯಶಸ್ಸಿಗೆ ಕಾರಣವಾದ ಗುರುಗಳು, ಪೋಷಕರು ಹಾಗೂ ಸ್ನೇಹಿತರ ಸಹಕಾರಕ್ಕೆ ಕೃತಜ್ಞತೆ ಸಲ್ಲಿಸಿದರು. ಈ ಸಾಧನೆ ಜಿಲ್ಲೆಯ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಿ ಪರಿಣಮಿಸಿದೆ.

ಬಿಸಿಗಾಳಿ ತೀವ್ರತೆ: ಮಕ್ಕಳಲ್ಲಿ ಡಿಹೈಡ್ರೇಶನ್ ಆಗಿದೆ ಎಂದು ತಿಳಿದುಕೊಳ್ಳುವುದು ಹೇಗೆ?

0

ದೇಶದ ಅನೇಕ ಭಾಗಗಳಲ್ಲಿ ದಿನದಿಂದ ದಿನಕ್ಕೆ ಉಷ್ಣತೆ ಏರಿಕೆಯಾಗುತ್ತಿರುವ ಹಿನ್ನೆಲೆ, ಮಕ್ಕಳ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಕಾಣಿಸಿಕೊಳ್ಳುತ್ತಿದೆ. ವಿಶೇಷವಾಗಿ ಚಿಕ್ಕ ಮಕ್ಕಳಲ್ಲಿ ಡಿಹೈಡ್ರೇಶನ್ ಸಮಸ್ಯೆ ಹೆಚ್ಚುತ್ತಿರುವುದಾಗಿ ಆರೋಗ್ಯ ತಜ್ಞರು ಎಚ್ಚರಿಸಿದ್ದಾರೆ.

ಗಾಜಿಯಾಬಾದ್ ಜಿಲ್ಲಾ ಆಸ್ಪತ್ರೆಯ ಪೀಡಿಯಾಟ್ರಿಕ್ ವಿಭಾಗದ ಡಾ. ವಿಪಿನ್ ಚಂದ್ರ ಉಪಾಧ್ಯಾಯ ಅವರ ಪ್ರಕಾರ, ಬೇಸಿಗೆಯಲ್ಲಿ ಮಕ್ಕಳಿಗೆ ಹೆಚ್ಚು ಬೆವರುವುದು ಸಾಮಾನ್ಯವಾಗಿದ್ದು, ಈ ವೇಳೆ ದೇಹದಿಂದ ನೀರು ವೇಗವಾಗಿ ಹೊರಹೋಗುತ್ತದೆ. ಸಾಕಷ್ಟು ಪ್ರಮಾಣದಲ್ಲಿ ನೀರು ಕುಡಿಯದಿರುವುದು, ಹೆಚ್ಚು ಹೊತ್ತು ಬಿಸಿಲಿನಲ್ಲಿ ಆಟವಾಡುವುದು ಹಾಗೂ ವಾಂತಿ-ಜಲದೋಷದಂತಹ ಸಮಸ್ಯೆಗಳು ಡಿಹೈಡ್ರೇಶನ್‌ಗೆ ಕಾರಣವಾಗುತ್ತವೆ ಎಂದು ತಿಳಿಸಿದ್ದಾರೆ.

ಮಕ್ಕಳಲ್ಲಿ ಡಿಹೈಡ್ರೇಶನ್ ಉಂಟಾದಾಗ ಬಾಯಾರಿಕೆ ಹೆಚ್ಚಾಗುವುದು, ತುಟಿ ಮತ್ತು ಬಾಯಿ ಒಣಗುವುದು ಮೊದಲ ಲಕ್ಷಣಗಳಾಗಿವೆ. ಜೊತೆಗೆ ಮಕ್ಕಳು ಸುಸ್ತಾಗುವುದು, ಕಿರಿಕಿರಿ ತೋರಿಸುವುದು ಹಾಗೂ ಆಟದಲ್ಲಿ ಆಸಕ್ತಿ ಕಡಿಮೆಯಾಗುವುದು ಕಾಣಿಸಬಹುದು. ಮೂತ್ರ ಪ್ರಮಾಣ ಕಡಿಮೆಯಾಗುವುದು ಅಥವಾ ಗಾಢ ಹಳದಿ ಬಣ್ಣದಲ್ಲಿ ಮೂತ್ರ ಹೊರಹೋಗುವುದು ಕೂಡ ಡಿಹೈಡ್ರೇಶನ್ ಸೂಚನೆಗಳಾಗಿವೆ. ಕೆಲ ಸಂದರ್ಭಗಳಲ್ಲಿ ಕಣ್ಣುಗಳು ಒಳಗೆ ಕುಸಿದಂತೆ ಕಾಣಿಸುವುದು ಹಾಗೂ ಅಳುವಾಗ ಕಣ್ಣೀರು ಕಡಿಮೆಯಾಗುವುದು ಕೂಡ ಗಮನಿಸಬಹುದಾಗಿದೆ.

ಈ ಸಮಸ್ಯೆಯನ್ನು ತಪ್ಪಿಸಲು ಮಕ್ಕಳಿಗೆ ಸಮಯಕ್ಕೆ ಸರಿಯಾಗಿ ನೀರು ಕುಡಿಸುವುದು ಅತ್ಯಂತ ಅಗತ್ಯ. ನೀರಿನ ಜೊತೆಗೆ ಎಳನೀರು, ಮಜ್ಜಿಗೆ ಹಾಗೂ ಮನೆಯಲ್ಲಿ ತಯಾರಿಸಿದ ಓಆರ್‌ಎಸ್ ನೀಡುವುದು ಉಪಯುಕ್ತ. ಬಿಸಿಲಿನಲ್ಲಿ ಹೆಚ್ಚು ಹೊತ್ತು ಆಟವಾಡುವುದನ್ನು ತಪ್ಪಿಸಿ, ಹೊರಗೆ ಹೋಗುವಾಗ ತಲೆಯನ್ನು ಮುಚ್ಚಿಕೊಳ್ಳುವಂತೆ ನೋಡಿಕೊಳ್ಳಬೇಕು. ಹಗುರವಾದ ಹಾಗೂ ಪೌಷ್ಟಿಕ ಆಹಾರ ನೀಡುವುದು ಮತ್ತು ಸ್ವಚ್ಛತೆ ಕಾಪಾಡುವುದು ಕೂಡ ಮುಖ್ಯವಾಗಿದೆ.

ಮಗು ಹೆಚ್ಚು ಸುಸ್ತಾಗಿದ್ದರೆ, ಪದೇ ಪದೇ ವಾಂತಿ ಮಾಡುತ್ತಿದ್ದರೆ ಅಥವಾ ಮೂತ್ರ ಪ್ರಮಾಣ ಬಹಳ ಕಡಿಮೆಯಾಗಿದ್ದರೆ ತಕ್ಷಣ ವೈದ್ಯರನ್ನು ಸಂಪರ್ಕಿಸುವುದು ಅವಶ್ಯಕ. ಸರಿಯಾದ ಸಮಯದಲ್ಲಿ ಚಿಕಿತ್ಸೆ ದೊರೆತರೆ ಗಂಭೀರ ಸಮಸ್ಯೆಗಳನ್ನು ತಪ್ಪಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ.

ಹಿಜಾಬ್, ಜನಿವಾರ ಗೊಂದಲಕ್ಕೆ ಪರಿಹಾರ: ಪರೀಕ್ಷಾರ್ಥಿಗಳಿಗೆ ಮರುಪರೀಕ್ಷೆ ನಡೆಸಲು ಎಂ.ಸಿ. ಸುಧಾಕರ್ ಸೂಚನೆ

ಬೆಂಗಳೂರು: ಸಿಟಿಇ ಪರೀಕ್ಷೆಯ ವೇಳೆ ವಸ್ತ್ರಸಂಹಿತೆ ಸಂಬಂಧ ಉಂಟಾದ ಗೊಂದಲದಿಂದ ತೊಂದರೆಗೊಳಗಾದ ಪರೀಕ್ಷಾರ್ಥಿಗಳಿಗೆ ಮರು ಪರೀಕ್ಷೆ ನಡೆಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಎಂ.ಸಿ. ಸುಧಾಕರ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾಲ್ವರು ಪರೀಕ್ಷಾರ್ಥಿಗಳು ಪರೀಕ್ಷಾ ಕೇಂದ್ರಗಳಲ್ಲಿ ಸಮಸ್ಯೆ ಎದುರಿಸಿದ್ದು, ಅವರಿಗೆ ಮಾತ್ರ ಮರು ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.

ಜನಿವಾರ ಹಾಗೂ ಹಿಜಾಬ್ ಸಂಬಂಧ ಬೆಂಗಳೂರು ಮತ್ತು ಚಿಕ್ಕಬಳ್ಳಾಪುರದ ಎರಡು ಪರೀಕ್ಷಾ ಕೇಂದ್ರಗಳಲ್ಲಿ ಗೊಂದಲ ಉಂಟಾಗಿತ್ತು. ಈ ಹಿನ್ನೆಲೆಯಲ್ಲಿ ಪರೀಕ್ಷಾರ್ಥಿಗಳು ಮರು ಪರೀಕ್ಷೆಗೆ ಅವಕಾಶ ನೀಡುವಂತೆ ಮನವಿ ಸಲ್ಲಿಸಿದ್ದರು.

ಈ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು, ತೊಂದರೆ ಅನುಭವಿಸಿದ ವಿದ್ಯಾರ್ಥಿಗಳಿಗೆ ಮಾತ್ರ ಅನ್ವಯವಾಗುವಂತೆ ಮರು ಪರೀಕ್ಷೆ ನಡೆಸಲಾಗುವುದು ಎಂದು ಸ್ಪಷ್ಟಪಡಿಸಿದರು.

ಪರೀಕ್ಷಾ ಗೊಂದಲಕ್ಕೆ ಒಳಗಾದ ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕ ನೀಡುವುದು ಸಮಂಜಸವಲ್ಲ. ಹೀಗಾಗಿ ಮರು ಪರೀಕ್ಷೆ ನಡೆಸುವುದು ಸೂಕ್ತ ಕ್ರಮ ಎಂದು ಸರ್ಕಾರ ನಿರ್ಧರಿಸಿದೆ ಎಂದರು.

ಈ ಸಂಬಂಧ ಅಧಿಕಾರಿಗಳೊಂದಿಗೆ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು. ಕಳೆದ ಬಾರಿಯೂ ಇಂತಹ ಗೊಂದಲ ಉಂಟಾಗಿತ್ತು. ಈ ಬಾರಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮರು ಪರೀಕ್ಷೆ ನಡೆಸಲು ನಿರ್ಧಾರ ಮಾಡಲಾಗಿದೆ ಎಂದು ಸಚಿವ ಎಂ.ಸಿ. ಸುಧಾಕರ್ ತಿಳಿಸಿದ್ದಾರೆ.

ಗಂಡನ ಕಿರುಕುಳಕ್ಕೆ ಬೇಸತ್ತು ಪತ್ನಿ ಆತ್ಮಹತ್ಯೆ: ಪತಿ ವಿರುದ್ಧ ಕೊಲೆ ಆರೋಪ ದಾಖಲು

0

ಚಿಕ್ಕೋಡಿ: ಗಂಡನ ಕಿರುಕುಳಕ್ಕೆ ಬೇಸತ್ತು ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಶಂಕರಮಠ ಗಲ್ಲಿಯಲ್ಲಿ ನಡೆದಿದೆ.

ಸಂಗೀತಾ ಗಾಡಿವಡ್ಡರ (35) ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ ಎಂದು ಗುರುತಿಸಲಾಗಿದೆ.  ಮಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಸಂಗೀತಾ ಸುಮಾರು 15 ವರ್ಷಗಳ ಹಿಂದೆ ವೆಂಕಟೇಶ್ ಗಾಡಿವಡ್ಡರ್ ಅವರನ್ನು ವಿವಾಹವಾಗಿದ್ದರು. ಕಳೆದ ಕೆಲವು ವರ್ಷಗಳಿಂದ ದಂಪತಿಯ ನಡುವೆ ಆಗಾಗ ಜಗಳಗಳು ನಡೆಯುತ್ತಿದ್ದು, ಕೌಟುಂಬಿಕ ಕಲಹ ತೀವ್ರಗೊಂಡಿತ್ತು ಎನ್ನಲಾಗಿದೆ.

ಮಂಗಳವಾರ ರಾತ್ರಿ ಗಂಡನ ಕಿರುಕುಳವನ್ನು ತಾಳಲಾರದೆ ಸಂಗೀತಾ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಮೃತಳ ತಾಯಿ ನೀಡಿರುವ ದೂರಿನ ಪ್ರಕಾರ, ಮನೆ ಕಟ್ಟಿಕೊಳ್ಳಲು 2 ಲಕ್ಷ ರೂಪಾಯಿ ತವರು ಮನೆಯಿಂದ ತಂದುಕೊಡುವಂತೆ ವೆಂಕಟೇಶ್ ನಿರಂತರವಾಗಿ ಒತ್ತಡ ಹೇರುತ್ತಿದ್ದನು. ಹಣ ನೀಡದ ಹಿನ್ನೆಲೆಯಲ್ಲಿ ಸಂಗೀತಾಳಿಗೆ ಹಲ್ಲೆ ನಡೆಸಿ ಬಳಿಕ ನೇಣು ಹಾಕಲಾಗಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಘಟನೆ ಮಾಹಿತಿ ತಿಳಿದು ಅಥಣಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

ನಗರದ ಗುಂಡಿಗಳನ್ನು ಮುಚ್ಚಲು ಕೂಡಲೇ ಕ್ರಮ ವಹಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ

ಬೆಂಗಳೂರು: ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು ಜನರ ಸಾವಿಗೆ ಕಾರಣವಾಗಿರುವ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಕಾರ್ಯಪಾಲಕ ಇಂಜಿನಿಯರ್ ಅವರನ್ನು ಅಮಾನತುಗೊಳಿಸಿ, ನೋಟೀಸು ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು. ಭಾರಿ ಮಳೆಯಿಂದ ಬೌರಿಂಗ್ ಆಸ್ಪತ್ರೆ ದುರಂತದ ಹಿನ್ನೆಲೆಯಲ್ಲಿ ಇಂದು ಅವರ ಅಧ್ಯಕ್ಷತೆಯಲ್ಲಿ ಜಿಬಿಎ ಆಯುಕ್ತರುಗಳ ಸಭೆ ಜರುಗಿತು.

ಬೆಂಗಳೂರಿನಲ್ಲಿ ಮಳೆಯಿಂದ ಉಂಟಾಗಿರುವ ಹಾನಿ ಹಾಗೂ ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತದಿಂದ ನಿನ್ನೆ ಏಳು ಜನ ಮೃತಪಟ್ಟಿರುವ ಕುರಿತಂತೆ ಜಿಬಿಎ ಆಯುಕ್ತರೊಂದಿಗೆ ಚರ್ಚಿಸಿದ ಮುಖ್ಯಮಂತ್ರಿಗಳು ಗೋಡೆಗೆ ಹಾನಿ ಆಗಲಿದೆ ಎಂದು ತಿಳಿದಿದ್ದರೂ ಕಾಮಗಾರಿ ನಡೆಯುವಾಗ ಮಣ್ಣು ಸುರಿದದ್ದು ಏಕೆ ಎಂದು ಪ್ರಶ್ನಿಸಿದರು.

ಗೋಡೆಗೆ ಹಾನಿಯಾಗುವಂತೆ ಮಣ್ಣು ಸುರಿದದ್ದು ನೀವು ಏಕೆ ನೋಡಿಕೊಳ್ಳಲಿಲ್ಲ ಎಂದು ಆಸ್ಪತ್ರೆ ಮುಖ್ಯಸ್ಥರನ್ನು ಮುಖ್ಯಮಂತ್ರಿಗಳು ಪ್ರಶ್ನಿಸಿದರು. ಬೌರಿಂಗ್ ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್ ನೀಡಲು ಸೂಚಿಸಿದ ಮುಖ್ಯಮಂತ್ರಿಗಳು ಬೆಂಗಳೂರಿನಲ್ಲಿ ಗುಂಡಿಗಳನ್ನು ಮುಚ್ಚಲು ಕೂಡಲೇ ಕ್ರಮ ಕೈಗೊಳ್ಳಬೇಕು ಎಂದರು.

ನಿನ್ನೆ ಬೆಂಗಳೂರಿನಲ್ಲಿ ಉಂಟಾದ ಮಳೆಯಲ್ಲಿ ಸಾಕಷ್ಟು ಹಾನಿಯಾಗಿದ್ದು, 250 ಕ್ಕೂ ಹೆಚ್ಚು ಮರಗಳು ಬಿದ್ದಿವೆ. ಏಳು ಜನ ಸಾವನ್ನಪ್ಪಿದ್ದಾರೆ. ಈಗಾಗಲೇ ಸತ್ತವರ ಕುಟುಂಬದವರಿಗೆ 5 ಲಕ್ಷ ಪರಿಹಾರ ಘೋಷಣೆ ಮಾಡಲಾಗಿದೆ.
ಗಾಯಗೊಂಡವರಿಗೆ ಉಚಿತ ಚಿಕಿತ್ಸೆ ನೀಡುವಂತೆ ಸೂಚಿಸಿದರು.

ಮುಂಗಾರು ಮಳೆ ಪ್ರಾರಂಭವಾಗುವ ಮೊದಲೇ ಸಿದ್ಧತೆ ಕೈಗೊಳ್ಳಿ

ಮುಂಗಾರು ಮಳೆ ಪ್ರಾರಂಭವಾಗುವ ಮೊದಲೇ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಬೆಂಗಳೂರಿನ ಐದೂ ವಲಯಗಳ ಆಯುಕ್ತರು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು . ಒಣಗಿರುವ ಅಪಾಯಕಾರಿ ಮರಗಳ ರೆಂಬೆಗಳನ್ನು ಕತ್ತರಿಸಬೇಕು ಎಂದು ಮುಖ್ಯಮಂತ್ರಿಗಳು ಸೂಚಿಸಿದರು.

ಮುಂದಿನ ದಿನಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಗಳಿದ್ದು ರಾಜಕಾಲುವೆಗಳಲ್ಲಿ ಹೂಳು ತೆಗೆಯುವುದು, ಪ್ರವಾಹ ಉಂಟಾಗದಂತೆ ಕ್ರಮ ತೆಗೆದುಕೊಳ್ಳಬೇಕು ಎಂದರು. ಮಳೆಯಿಂದ ರಸ್ತೆಯಲ್ಲಿ ಬಿದ್ದಿರುವ ಕಸ, ರೆಂಬೆಗಳನ್ನು ಕೂಡಲೇ ತೆರವು ಮಾಡಲು ಸೂಚಿಸಿದರು. ಅಂಡರ್ ಪಾಸ್ ಗಳಲ್ಲಿ ಮಳೆ ನೀರು ನಿಲ್ಲದಂತೆ ಹಾಗೂ ಜನ ಅಂಡರ್ ಪಾಸ್ ಬಳಸದಂತೆ ಕೂಡಲೇ ಬ್ಯಾರಿಕೇಡ್ ಹಾಕಿ ಎಂದು ಅವರು ಸೂಚಿಸಿದರು.

ವೆಂಕಟೇಶ ಕುರುಬರ್ ಹತ್ಯೆ ಕೇಸ್: 6 ಆರೋಪಿಗಳಿಗೆ ಗಲ್ಲು ಶಿಕ್ಷೆ, ತಲಾ 3 ಲಕ್ಷ ದಂಡ

0

ಕೊಪ್ಪಳ: ಜಿಲ್ಲೆಯ ಗಂಗಾವತಿನಲ್ಲಿ ನಡೆದ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ವೆಂಕಟೇಶ ಕುರುಬರ್ ಹತ್ಯೆ ಪ್ರಕರಣದಲ್ಲಿ ನ್ಯಾಯಾಲಯ ಗಂಭೀರ ತೀರ್ಪು ನೀಡಿದೆ.

ಗಂಗಾವತಿ ಹೆಚ್ಚುವರಿ ಸತ್ರ ನ್ಯಾಯಾಲಯ ಆರು ಅಪರಾಧಿಗಳಿಗೆ ಗಲ್ಲು ಶಿಕ್ಷೆ ವಿಧಿಸಿದ್ದು, ಪ್ರತಿಯೊಬ್ಬರಿಗೂ 3 ಲಕ್ಷ ರೂ. ದಂಡ ವಿಧಿಸಿದೆ.

ಮಾರುತಿ ಕೊಲೆ ಪ್ರಕರಣದಲ್ಲಿ ಸಾಕ್ಷಿಯಾಗಿದ್ದ ಕಾರಣಕ್ಕೆ ವೆಂಕಟೇಶನನ್ನು ಗುರಿಯಾಗಿಸಿ ಪೂರ್ವ ಯೋಜಿತವಾಗಿ ಹತ್ಯೆ ಮಾಡಲಾಗಿದೆ ಎಂದು ಕೋರ್ಟ್ ಸ್ಪಷ್ಟಪಡಿಸಿದೆ. ಸಿಸಿಟಿವಿ ಸಾಕ್ಷ್ಯಗಳು ಹಾಗೂ ಆರೋಪಿಗಳ ಹಿಂದಿನ ಅಪರಾಧ ಚರಿತ್ರೆ ತೀರ್ಪಿನಲ್ಲಿ ಪ್ರಮುಖ ಪಾತ್ರ ವಹಿಸಿದೆ.

ಅಕ್ಟೋಬರ್ 8ರ ರಾತ್ರಿ ಕಾರಿನಲ್ಲಿ ಹಿಂಬಾಲಿಸಿ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಕೆಳಗೆ ಬೀಳಿಸಿದ ಬಳಿಕ ಮಾರಕಾಸ್ತ್ರಗಳಿಂದ ದಾಳಿ ನಡೆಸಿ ವೆಂಕಟೇಶನನ್ನು ಕೊಲೆ ಮಾಡಲಾಗಿತ್ತು.

ಈ ಪ್ರಕರಣವನ್ನು ಸವಾಲಿನ ಪ್ರಕರಣವೆಂದು ಪರಿಗಣಿಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿ ಚಾರ್ಜ್‌ಶೀಟ್ ಸಲ್ಲಿಸಿದ್ದು, ಇದೀಗ ಕೋರ್ಟ್ ತೀರ್ಪಿನಿಂದ ಪ್ರಕರಣಕ್ಕೆ ತಿರುವು ಸಿಕ್ಕಿದೆ.

ಆಸ್ತಿ ವಿವಾದ; ದೆಹಲಿ ಹೈಕೋರ್ಟ್​ನಿಂದ ಕರಿಷ್ಮಾ ಕಪೂರ್ ಮಕ್ಕಳಿಗೆ ಬಿಗ್ ರಿಲೀಫ್

ಉದ್ಯಮಿ ಸಂಜಯ್ ಕಪೂರ್ ಅವರ ಆಸ್ತಿ ಹಂಚಿಕೆ ಕುರಿತ ಕುಟುಂಬ ಕಲಹ ಗಂಭೀರ ಹಂತ ತಲುಪಿದ್ದು, ದೆಹಲಿ ಹೈಕೋರ್ಟ್ ಆಸ್ತಿಗಳನ್ನು ಫ್ರೀಜ್ ಮಾಡಲು ಆದೇಶಿಸಿದೆ.

ಕರಿಷ್ಮಾ ಕಪೂರ್ ಅವರ ಮಕ್ಕಳಾದ ಕಿಯಾನ್ ಮತ್ತು ಸಮೈರಾ, ಪ್ರಿಯಾ ಸಚ್‌ದೇವ ಕಪೂರ್ ಸಲ್ಲಿಸಿದ ವಿಲ್ ಹಾಗೂ ಆಸ್ತಿ ವಿವರಗಳ ಮೇಲೆ ಅನುಮಾನ ವ್ಯಕ್ತಪಡಿಸಿದ್ದಾರೆ. ಹಲವು ಸ್ಥಿರಾಸ್ತಿಗಳು ಮತ್ತು ಅಮೂಲ್ಯ ವರ್ಣಚಿತ್ರಗಳನ್ನು ಪಟ್ಟಿಯಿಂದ ಹೊರಗಿಟ್ಟಿರುವ ಆರೋಪ ಕೇಳಿಬಂದಿದೆ.

ಈ ಹಿನ್ನೆಲೆಯಲ್ಲಿ ಕೋರ್ಟ್, ಎಲ್ಲಾ ಆಸ್ತಿಗಳನ್ನು ಸಂರಕ್ಷಿಸಲು ಹಾಗೂ ಯಾವುದೇ ರೀತಿಯ ವ್ಯವಹಾರಗಳನ್ನು ನಿಲ್ಲಿಸಲು ಸೂಚಿಸಿದೆ. ಜೊತೆಗೆ ವಿದೇಶಿ ಬ್ಯಾಂಕ್ ಖಾತೆಗಳು ಮತ್ತು ಕ್ರಿಪ್ಟೋಕರೆನ್ಸಿ ಹೂಡಿಕೆಗಳ ವಿವರಗಳನ್ನು ನ್ಯಾಯಾಲಯಕ್ಕೆ ಸಲ್ಲಿಸುವಂತೆ ಪ್ರತಿವಾದಿಗಳಿಗೆ ಆದೇಶಿಸಲಾಗಿದೆ.

ಪ್ರಕರಣದ ಅಂತಿಮ ತೀರ್ಪು ಬರುವವರೆಗೆ ಆಸ್ತಿಗಳ ಮೇಲೆ ಕಟ್ಟುನಿಟ್ಟಿನ ನಿಯಂತ್ರಣ ಮುಂದುವರಿಯಲಿದೆ.

error: Content is protected !!