ಬೆಂಗಳೂರು: ರಾಜ್ಯದಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆಯಲ್ಲಿ ಉಂಟಾಗಿರುವ ಸಮಸ್ಯೆಯಿಂದ ಹೋಟೆಲ್ಗಳಿಗೆ ತಾತ್ಕಾಲಿಕ ಅಡಚಣೆ ಉಂಟಾಗಿದ್ದು, ಇನ್ನೂ ಒಂದು ವಾರದಿಂದ 10 ದಿನಗಳವರೆಗೆ ಸಮಸ್ಯೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಸಚಿವ ಮುನಿಯಪ್ಪ ತಿಳಿಸಿದ್ದಾರೆ.
ವಿಧಾನಸಭೆಯಲ್ಲಿ ಈ ವಿಚಾರವನ್ನು ಕಾಂಗ್ರೆಸ್ ಸದಸ್ಯರಾದ ಐವಾನ್ ಡಿಸೋಜ ಮತ್ತು ನಾಗರಾಜ್ ಯಾದವ್ ಪ್ರಸ್ತಾಪಿಸಿದರು. ರಾಜ್ಯದಲ್ಲಿ ಆಟೋ, ಹೋಟೆಲ್ಗಳು ಸೇರಿದಂತೆ ಹಲವೆಡೆ ಕಮರ್ಷಿಯಲ್ ಗ್ಯಾಸ್ ದೊರೆಯುತ್ತಿಲ್ಲ. ಗ್ಯಾಸ್ ಕಾಳಸಂತೆಯಲ್ಲಿ ಮಾರಾಟವಾಗುತ್ತಿದೆ ಎಂಬ ಆರೋಪವೂ ಕೇಳಿಬರುತ್ತಿದೆ ಎಂದು ಅವರು ಹೇಳಿದರು.
ಗ್ಯಾಸ್ ಕೊರತೆಯಿಂದ ಹೋಟೆಲ್ಗಳಲ್ಲಿ ತಿಂಡಿ, ಊಟ ವ್ಯವಸ್ಥೆಗೆ ತೊಂದರೆ ಉಂಟಾಗುತ್ತಿದೆ. ವಿಶ್ವವಿದ್ಯಾಲಯಗಳಲ್ಲಿಯೂ ಗ್ಯಾಸ್ನಿಂದ ಅಡುಗೆ ಮಾಡಲು ಸಾಧ್ಯವಾಗುತ್ತಿಲ್ಲ. ಇಂದಿರಾ ಕ್ಯಾಂಟೀನ್, ಆಸ್ಪತ್ರೆಗಳು ಸೇರಿದಂತೆ ಹಲವು ಕಡೆ ಸಮಸ್ಯೆ ಎದುರಾಗಿದೆ. ಮದುವೆ ಸಮಾರಂಭಗಳು ಮತ್ತು ದೇವಸ್ಥಾನಗಳಲ್ಲಿ ಪ್ರಸಾದ ತಯಾರಿಕೆಗೆ ಕೂಡ ಅಡಚಣೆ ಉಂಟಾಗಿದೆ ಎಂದು ಸದಸ್ಯರು ತಿಳಿಸಿದರು.
ಇದಕ್ಕೆ ಉತ್ತರಿಸಿದ ಸಚಿವ ಮುನಿಯಪ್ಪ, ಇಂದು ಕೂಡ ತೈಲ ಕಂಪನಿಗಳೊಂದಿಗೆ ಮಾತುಕತೆ ನಡೆಸಲಾಗಿದೆ. ಆಸ್ಪತ್ರೆಗಳು, ಹಾಸ್ಟೆಲ್ಗಳು ಹಾಗೂ ವಸತಿ ನಿಲಯಗಳಿಗೆ ಕಮರ್ಷಿಯಲ್ ಗ್ಯಾಸ್ ಪೂರೈಕೆ ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.
ಪ್ರಸ್ತುತ ತಾತ್ಕಾಲಿಕವಾಗಿ ಸಮಸ್ಯೆ ಎದುರಾಗಿದ್ದು, ಒಂದು ವಾರದೊಳಗೆ ಸಮಸ್ಯೆ ಪರಿಹಾರವಾಗಲಿದೆ. ಈ ಅವಧಿಯಲ್ಲಿ ಹೋಟೆಲ್ಗಳು ಸಾಧ್ಯವಾದಷ್ಟು ಎಲೆಕ್ಟ್ರಿಕ್ ಸ್ಟೌವ್ ಬಳಕೆ ಮಾಡಲು ಮನವಿ ಮಾಡಲಾಗಿದೆ. ಹೋಟೆಲ್ ಮಾಲೀಕರು ಒಂದು ವಾರ ಸಹನೆ ವಹಿಸಬೇಕು ಎಂದು ಸಚಿವರು ಮನವಿ ಮಾಡಿದ್ದಾರೆ.

