Home Blog

“ಮನ್ ಕಿ ಬಾತ್ ಅಲ್ಲ, ಯುವಕರ ದಿಲ್ ಕಿ ಬಾತ್ ಕೇಳಿ”; ಕೇಂದ್ರಕ್ಕೆ AAP ನಾಯಕನ ತಿರುಗೇಟು!

0

ಗದಗ: ನೀಟ್ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್, ಜಲಫಿರಂಗಿ ಹಾಗೂ ಆಶ್ರುವಾಯು ಪ್ರಯೋಗ ನಡೆಸಿರುವುದು ಪ್ರಜಾಪ್ರಭುತ್ವ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲಿನ ದಾಳಿ ಎಂದು ಆಮ್ ಆದ್ಮಿ ಪಕ್ಷದ ಗದಗ ಜಿಲ್ಲಾಧ್ಯಕ್ಷ ಡಾ. ದಾದಾಪೀರ ಕಲೆಗಾರ ಆರೋಪಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ನೀಟ್ ಪರೀಕ್ಷೆಯ ಅಕ್ರಮಗಳಿಂದ ದೇಶದ ಲಕ್ಷಾಂತರ ವಿದ್ಯಾರ್ಥಿಗಳು ಆತಂಕಕ್ಕೆ ಒಳಗಾಗಿದ್ದು, ನ್ಯಾಯಯುತ ತನಿಖೆ ಮತ್ತು ಕ್ರಮಕ್ಕಾಗಿ ವಿದ್ಯಾರ್ಥಿಗಳು ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ಸಂದರ್ಭದಲ್ಲಿ ಅವರ ಮೇಲೆ ಬಲಪ್ರಯೋಗ ನಡೆಸಿರುವುದು ಖಂಡನೀಯ ಎಂದು ಹೇಳಿದರು.

ಚುನಾವಣೆಗೂ ಮುನ್ನ ಯುವಕರಿಗೆ ಪ್ರತಿ ವರ್ಷ ಎರಡು ಕೋಟಿ ಉದ್ಯೋಗ ನೀಡುವುದು ಹಾಗೂ ಕಪ್ಪುಹಣವನ್ನು ದೇಶಕ್ಕೆ ತರುವುದಾಗಿ ಭರವಸೆ ನೀಡಿದ್ದ ಕೇಂದ್ರ ಸರ್ಕಾರ, ಇದೀಗ ಯುವ ಸಮುದಾಯದ ಸಮಸ್ಯೆಗಳನ್ನು ಆಲಿಸುವ ಬದಲು ದಮನಕಾರಿ ಕ್ರಮಗಳನ್ನು ಅನುಸರಿಸುತ್ತಿದೆ ಎಂದು ಟೀಕಿಸಿದರು.

“ಪ್ರಧಾನಿ ನರೇಂದ್ರ ಮೋದಿಯವರು ‘ಮನ್ ಕಿ ಬಾತ್’ ಮಾತ್ರವಲ್ಲ, ದೇಶದ ಯುವಕರ ‘ದಿಲ್ ಕಿ ಬಾತ್’ ಕೂಡ ಕೇಳಬೇಕು” ಎಂದು ಅವರು ಆಗ್ರಹಿಸಿದರು.

ನೀಟ್ ಪರೀಕ್ಷೆ ವಿವಾದ ಹಾಗೂ ಪ್ರತಿಭಟನೆ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಲ್ಲಿ ಮೂಡಿರುವ ಆತಂಕ ನಿವಾರಿಸಲು ಕೇಂದ್ರ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು. ಈ ಘಟನೆಯ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು. ಪ್ರತಿಭಟನೆಯಲ್ಲಿ ಗಾಯಗೊಂಡ ವಿದ್ಯಾರ್ಥಿಗಳಿಗೆ ಸಮರ್ಪಕ ಚಿಕಿತ್ಸೆ ಹಾಗೂ ಸೂಕ್ತ ಪರಿಹಾರ ನೀಡಬೇಕು ಎಂದು ಡಾ. ದಾದಾಪೀರ ಕಲೆಗಾರ ಒತ್ತಾಯಿಸಿದರು.

ಪ್ರಧಾನಿ ನರೇಂದ್ರ ಮೋದಿ ಅವರು ಕೇವಲ ‘ಮನ್ ಕಿ ಬಾತ್’ ಮಾತ್ರವಲ್ಲ, ದೇಶದ ಯುವಕರ ‘ದಿಲ್ ಕಿ ಬಾತ್’ ಕೂಡ ಕೇಳಬೇಕು ಎಂದು ಅವರು ಆಗ್ರಹಿಸಿದ್ದಾರೆ.

ನೀಟ್ ವಿವಾದದಿಂದ ವಿದ್ಯಾರ್ಥಿಗಳಲ್ಲಿ ಮೂಡಿರುವ ಆತಂಕ ನಿವಾರಿಸಲು ಕೇಂದ್ರ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು. ಘಟನೆಯ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಹಾಗೂ ಪ್ರತಿಭಟನೆಯಲ್ಲಿ ಗಾಯಗೊಂಡ ವಿದ್ಯಾರ್ಥಿಗಳಿಗೆ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಗದಗ ಪೊಲೀಸರ ಖಡಕ್ ಆ್ಯಕ್ಷನ್; ನಾಲ್ವರು ಕುಖ್ಯಾತ ಆರೋಪಿಗಳಿಗೆ ಗಡಿಪಾರು ಶಿಕ್ಷೆ!

0

ಗದಗ: ವರ್ಷಗಳಿಂದ ಗಲಭೆ, ಜಾತಿ ನಿಂದನೆ, ಮಹಿಳೆಯರ ಮೇಲಿನ ದೌರ್ಜನ್ಯ, ಜೂಜಾಟ, ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸುವುದು, ಜೀವ ಬೆದರಿಕೆ ಸೇರಿದಂತೆ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ ಸಾರ್ವಜನಿಕರಲ್ಲಿ ಭಯದ ವಾತಾವರಣ ಸೃಷ್ಟಿಸುತ್ತಿದ್ದ ನಾಲ್ವರು ಕುಖ್ಯಾತ ಆರೋಪಿಗಳ ವಿರುದ್ಧ ಗದಗ ಜಿಲ್ಲಾ ಪೊಲೀಸ್ ಇಲಾಖೆ ಖಡಕ್ ಕ್ರಮ ಕೈಗೊಂಡಿದೆ.

ಸಮಾಜದ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುತ್ತಿದ್ದಾರೆ ಎಂಬ ಕಾರಣಕ್ಕೆ ನಾಲ್ವರು ಆರೋಪಿಗಳನ್ನು ವಿವಿಧ ಜಿಲ್ಲೆಗಳಿಗೆ ಗಡಿಪಾರು ಮಾಡುವಂತೆ ವಿಶೇಷ ಕಾರ್ಯನಿರ್ವಾಹಕ ದಂಡಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳ ವರದಿ, ಆರೋಪಿಗಳ ಅಪರಾಧ ಹಿನ್ನೆಲೆ ಹಾಗೂ ಸಾರ್ವಜನಿಕ ಹಿತಾಸಕ್ತಿಯನ್ನು ಪರಿಗಣಿಸಿ ಈ ಕ್ರಮ ಕೈಗೊಳ್ಳಲಾಗಿದೆ. ಸಮಾಜವಿರೋಧಿ ಚಟುವಟಿಕೆಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಜಿಲ್ಲಾ ಪೊಲೀಸ್ ಇಲಾಖೆ ಈ ಮೂಲಕ ಸ್ಪಷ್ಟ ಸಂದೇಶ ರವಾನಿಸಿದೆ.

ಗಡಿಪಾರು ಆದ ಆರೋಪಿಗಳ ವಿವರ:

ಹರೀಶ ಮೀರಪ್ಪ ಹೊಸಮನಿ (ಗದಗ):
ಈತನ ವಿರುದ್ಧ ಮಹಿಳೆಯರ ಮೇಲಿನ ದೌರ್ಜನ್ಯ, ಜಾತಿ ನಿಂದನೆ, ಹಲ್ಲೆ, ಅವಾಚ್ಯ ಶಬ್ದಗಳಿಂದ ನಿಂದನೆ ಹಾಗೂ ಜೀವ ಬೆದರಿಕೆ ಸೇರಿದಂತೆ ವಿವಿಧ ಪ್ರಕರಣಗಳು ದಾಖಲಾಗಿವೆ.

ಕ್ರೈಂ ನಂ. 51/2024ರಲ್ಲಿ ಐಪಿಸಿ ಕಲಂ 323, 354, 504, 506, 34 ಹಾಗೂ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಕ್ರೈಂ ನಂ. 10/2025ರಲ್ಲಿ ಬಿಎನ್‌ಎಸ್ ಕಲಂ 189(2), 191(1), 352, 351(1), 190 ಹಾಗೂ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ನಾಗರಾಜ ಅಂದಪ್ಪ ಉಕ್ಕಲಿ (ಮುಂಡರಗಿ):
ಜೂಜಾಟವನ್ನೇ ದಂಧೆಯಾಗಿ ಮಾಡಿಕೊಂಡಿದ್ದ ಈತನ ವಿರುದ್ಧ ಕರ್ನಾಟಕ ಪೊಲೀಸ್ ಕಾಯ್ದೆ 78(3) ಅಡಿಯಲ್ಲಿ ಮೂರು ಪ್ರಕರಣಗಳು ದಾಖಲಾಗಿವೆ.

ಕ್ರೈಂ ನಂ. 31/2023, ಕ್ರೈಂ ನಂ. 167/2023 ಹಾಗೂ ಕ್ರೈಂ ನಂ. 186/2024ರಲ್ಲಿ ಪ್ರಕರಣಗಳು ದಾಖಲಾಗಿವೆ.

ಮುತ್ತಪ್ಪ ಹನುಮಂತಪ್ಪ ಲಕ್ಕಲಕಟ್ಟಿ (ಗಜೇಂದ್ರಗಡ):
ಗಲಭೆ, ಮಾರಾಮಾರಿ, ಅಪಾಯಕಾರಿ ಆಯುಧಗಳಿಂದ ಹಲ್ಲೆ, ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿಪಡಿಸುವುದು, ದರೋಡೆ ಯತ್ನ, ವಂಚನೆ ಹಾಗೂ ಜೀವ ಬೆದರಿಕೆ ಸೇರಿದಂತೆ ಹಲವು ಗಂಭೀರ ಪ್ರಕರಣಗಳಲ್ಲಿ ಈತ ಆರೋಪಿಯಾಗಿದ್ದಾನೆ.

ಕ್ರೈಂ ನಂ. 19/2012ರಲ್ಲಿ ಐಪಿಸಿ ಕಲಂ 143, 147, 148, 323, 326, 353, 504, 149 ಹಾಗೂ ಕರ್ನಾಟಕ ಸಾರ್ವಜನಿಕ ಆಸ್ತಿ ಹಾನಿ ತಡೆ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಕ್ರೈಂ ನಂ. 146/2015ರಲ್ಲಿ ಐಪಿಸಿ ಕಲಂ 341, 393, 34ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಕ್ರೈಂ ನಂ. 19/2026ರಲ್ಲಿ ಬಿಎನ್‌ಎಸ್-2023ರ ಕಲಂ 318(3), 318(4), 319(2), 322, 336(2), 336(3), 340(2), 3(5) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಚಿದಾನಂದ ವಿರೂಪಾಕ್ಷಪ್ಪ ಗೋಟೂರ (ಬೆಟಗೇರಿ):
ಜೂಜಾಟ ಪ್ರಕರಣಗಳಲ್ಲಿ ನಿರಂತರವಾಗಿ ಭಾಗಿಯಾಗಿದ್ದ ಈತನ ವಿರುದ್ಧ ಕರ್ನಾಟಕ ಪೊಲೀಸ್ ಕಾಯ್ದೆ 78(3) ಅಡಿಯಲ್ಲಿ ಐದು ಪ್ರಕರಣಗಳು ದಾಖಲಾಗಿವೆ.

ಕ್ರೈಂ ನಂ. 96/2020, 17/2021, 73/2023, 101/2023 ಹಾಗೂ 23/2024ರಲ್ಲಿ ಪ್ರಕರಣಗಳು ದಾಖಲಾಗಿವೆ.

ಪೊಲೀಸರ ಖಡಕ್ ಸಂದೇಶ:

ಜಿಲ್ಲೆಯಲ್ಲಿ ಸಮಾಜವಿರೋಧಿ ಚಟುವಟಿಕೆಗಳಲ್ಲಿ ತೊಡಗಿ ಸಾರ್ವಜನಿಕರ ನೆಮ್ಮದಿ ಹಾಳು ಮಾಡುವವರ ವಿರುದ್ಧ ಯಾವುದೇ ಮನ್ನಣೆ ನೀಡುವುದಿಲ್ಲ. ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವವರ ವಿರುದ್ಧ ಮುಂದೆಯೂ ಇದೇ ರೀತಿಯ ಕಠಿಣ ಕ್ರಮ ಮುಂದುವರಿಸಲಾಗುವುದು ಎಂದು ಗದಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್ ಎಚ್ಚರಿಕೆ ನೀಡಿದ್ದಾರೆ.

“ಇದು ದ್ವಿಮುಖ ನೀತಿ” NEET ಪ್ರತಿಭಟನೆ ಕುರಿತು ರಾಹುಲ್ ಗಾಂಧಿ ವಿರುದ್ಧ ಜೋಶಿ ವಾಗ್ದಾಳಿ

0

ನವದೆಹಲಿ/ಬೆಂಗಳೂರು: NEET ಪರೀಕ್ಷೆ ವಿಚಾರವಾಗಿ ಕೇಂದ್ರ ಸರ್ಕಾರದ ವಿರುದ್ಧ ಧ್ವನಿ ಎತ್ತುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಕರ್ನಾಟಕದ ಕೆಪಿಎಸ್ಸಿ ಅಕ್ರಮಗಳ ಬಗ್ಗೆ ಏಕೆ ಮಾತನಾಡುತ್ತಿಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಪ್ರಶ್ನಿಸಿದ್ದಾರೆ.

ದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಷ್ಟ್ರೀಯ ಪರೀಕ್ಷೆಗಳ ವಿಚಾರದಲ್ಲಿ ವಿಪಕ್ಷಗಳು ರಾಜಕೀಯ ಮಾಡುತ್ತಿವೆ ಎಂದು ಆರೋಪಿಸಿದರು. NEET ವಿವಾದದ ಕುರಿತು ಸಂಸತ್ತಿನಲ್ಲಿ ಮುಕ್ತ ಹಾಗೂ ಸತ್ಯಾಧಾರಿತ ಚರ್ಚೆಗೆ ಕೇಂದ್ರ ಸರ್ಕಾರ ಸಿದ್ಧವಿದೆ ಎಂದ ಅವರು, ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಎಲ್ಲರೂ ಒಟ್ಟಾಗಿ ಚರ್ಚೆ ನಡೆಸಬೇಕು ಎಂದು ಮನವಿ ಮಾಡಿದರು.

“ಕರ್ನಾಟಕದಲ್ಲಿ KPSC ಬಗ್ಗೆ ರಾಹುಲ್ ಗಾಂಧಿ ಏಕೆ ಮೌನ?”

NEET ವಿಚಾರದಲ್ಲಿ ಕೇಂದ್ರ ಸರ್ಕಾರವನ್ನು ಪ್ರಶ್ನಿಸುತ್ತಿರುವ ರಾಹುಲ್ ಗಾಂಧಿ, ಕಾಂಗ್ರೆಸ್ ಆಡಳಿತದಲ್ಲಿರುವ ಕರ್ನಾಟಕದಲ್ಲಿ KPSC ಸಂಬಂಧಿತ ಆರೋಪಗಳ ಬಗ್ಗೆ ಧ್ವನಿ ಎತ್ತುತ್ತಿಲ್ಲ ಎಂದು ಜೋಶಿ ವಾಗ್ದಾಳಿ ನಡೆಸಿದರು.

ಕರ್ನಾಟಕದಲ್ಲಿ ಸುಮಾರು 2.7 ಲಕ್ಷ ಸರ್ಕಾರಿ ಹುದ್ದೆಗಳು ಖಾಲಿ ಇವೆ. KPSC ಅಧ್ಯಕ್ಷರ ವಿರುದ್ಧ ಭ್ರಷ್ಟಾಚಾರದ ಆರೋಪಗಳು ಕೇಳಿಬಂದಿವೆ. ಈ ವಿಚಾರವಾಗಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳ ಮೇಲೂ ಕ್ರಮ ಕೈಗೊಳ್ಳಲಾಗಿದೆ. ಆದರೂ ರಾಹುಲ್ ಗಾಂಧಿ ವಿದ್ಯಾರ್ಥಿಗಳ ಪರವಾಗಿ ಮಾತನಾಡಲಿಲ್ಲ ಎಂದು ಆರೋಪಿಸಿದರು.

NEET ಪ್ರಕರಣದಲ್ಲಿ ಸರ್ಕಾರದ ಕ್ರಮ ಸಮರ್ಥನೆ:

NEET ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಸರ್ಕಾರ ಯಾವುದೇ ನೆಪ ಹೇಳಿ ಹಿಂದೆ ಸರಿದಿಲ್ಲ. ಪ್ರಕರಣ ಸಂಬಂಧ ಈಗಾಗಲೇ 14 ಮಂದಿಯನ್ನು ಬಂಧಿಸಲಾಗಿದೆ. ಪರೀಕ್ಷಾ ಅಕ್ರಮ ತಡೆಯಲು ಕಠಿಣ ಕಾನೂನು ಜಾರಿಗೆ ತರಲಾಗಿದೆ ಎಂದು ಪ್ರಲ್ಹಾದ ಜೋಶಿ ಹೇಳಿದರು.

ಪರೀಕ್ಷಾ ಮಾಫಿಯಾಗೆ 10 ವರ್ಷ ಜೈಲು ಶಿಕ್ಷೆ ಮತ್ತು ಭಾರೀ ದಂಡ ವಿಧಿಸುವ ನಿಯಮಗಳನ್ನು ಜಾರಿಗೆ ತರಲಾಗಿದೆ. ಪರೀಕ್ಷಾ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಲು ಸರ್ಕಾರ ಬದ್ಧವಾಗಿದೆ ಎಂದು ಅವರು ತಿಳಿಸಿದರು.

“NEET ಪರೀಕ್ಷೆ ರದ್ದು ಮಾಡಿ ಮರು ಪರೀಕ್ಷೆ ನಡೆಸಲಾಗಿದೆ”

ಪ್ರಶ್ನೆ ಪತ್ರಿಕೆ ಸೋರಿಕೆ ವಿಷಯ ಬೆಳಕಿಗೆ ಬಂದ ತಕ್ಷಣ ಸರ್ಕಾರ NEET ಪರೀಕ್ಷೆಯನ್ನು ರದ್ದುಗೊಳಿಸಿ, ಬಳಿಕ ಪಾರದರ್ಶಕವಾಗಿ ಮರು ಪರೀಕ್ಷೆ ನಡೆಸಿದೆ. ಫಲಿತಾಂಶವನ್ನೂ ಶೀಘ್ರವಾಗಿ ಪ್ರಕಟಿಸಲಾಗಿದೆ ಎಂದು ಜೋಶಿ ಹೇಳಿದರು.

2014ರಿಂದ ನರೇಂದ್ರ ಮೋದಿ ಸರ್ಕಾರ ಯುವಕರಿಗೆ ಅರ್ಹತೆ ಆಧಾರದ ಮೇಲೆ ಅವಕಾಶ ಸಿಗುವಂತೆ ಕ್ರಮ ಕೈಗೊಂಡಿದೆ. ವೈದ್ಯಕೀಯ ಶಿಕ್ಷಣದಲ್ಲಿ ಸೀಟುಗಳ ಸಂಖ್ಯೆಯನ್ನು ಹೆಚ್ಚಿಸಲಾಗಿದೆ ಹಾಗೂ AIIMS ಸಂಸ್ಥೆಗಳ ಸಂಖ್ಯೆಯನ್ನೂ ವಿಸ್ತರಿಸಲಾಗಿದೆ ಎಂದು ಅವರು ವಿವರಿಸಿದರು.

ವಿದ್ಯಾರ್ಥಿಗಳ ಭವಿಷ್ಯಕ್ಕೆ ಸಂಬಂಧಿಸಿದ ಪರೀಕ್ಷಾ ವ್ಯವಸ್ಥೆಯನ್ನು ಸುಧಾರಿಸಲು ಸರ್ಕಾರ ಎಲ್ಲಾ ಅಗತ್ಯ ಕ್ರಮಗಳನ್ನು ಮುಂದುವರಿಸಲಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸ್ಪಷ್ಟಪಡಿಸಿದರು.

ಬರ ನಿರ್ವಹಣೆಗೆ ಸರ್ಕಾರ ಸಂಪೂರ್ಣ ಸಜ್ಜು; ಶಾಸಕರಿಗೆ ₹1 ಕೋಟಿ, ಜಿಲ್ಲೆಗಳಿಗೆ ₹5 ಕೋಟಿ ಅನುದಾನ: ಡಿಸಿಎಂ ಪರಮೇಶ್ವರ್

ಬೆಂಗಳೂರು: ರಾಜ್ಯದಲ್ಲಿ ಎದುರಾಗಿರುವ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಸರ್ಕಾರ ಸಂಪೂರ್ಣ ಸಜ್ಜಾಗಿದ್ದು, ಅಗತ್ಯ ಅನುದಾನದ ಕೊರತೆಯಿಲ್ಲ ಎಂದು ಉಪ ಮುಖ್ಯಮಂತ್ರಿ ಹಾಗೂ ಕಂದಾಯ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ.

ಸದಾಶಿವನಗರದ ತಮ್ಮ ಗೃಹ ಕಚೇರಿಯಲ್ಲಿ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬರ ನಿರ್ವಹಣೆಗೆ ಈಗಾಗಲೇ ಪ್ರತಿ ಶಾಸಕರಿಗೆ ₹1 ಕೋಟಿ ನೀಡಲು ಸರ್ಕಾರ ತೀರ್ಮಾನಿಸಿದೆ. ಜೊತೆಗೆ ಕುಡಿಯುವ ನೀರಿನ ಸಮರ್ಪಕ ಪೂರೈಕೆಗಾಗಿ ರಾಜ್ಯದ ಪ್ರತಿ ಜಿಲ್ಲೆಗೆ ₹5 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಹೇಳಿದರು.

ಇದರೊಂದಿಗೆ ವಿವಿಧ ಪಿಡಿ (PD) ಖಾತೆಗಳಲ್ಲಿ ಈಗಾಗಲೇ ₹329 ಕೋಟಿ ಲಭ್ಯವಿದ್ದು, ಸರ್ಕಾರಕ್ಕೆ ಯಾವುದೇ ಹಣಕಾಸಿನ ಕೊರತೆಯಿಲ್ಲ. ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳಲು ಸರ್ಕಾರ ಸಿದ್ಧವಾಗಿದೆ ಎಂದು ಅವರು ಸ್ಪಷ್ಟಪಡಿಸಿದರು.

ಡಿಸಿಎಂ ಪರಮೇಶ್ವರ್ ಮಾತನಾಡಿ, ಮೈಸೂರು ಹಾಗೂ ಬೆಂಗಳೂರು ವಿಭಾಗಗಳ ಬರ ಪರಿಸ್ಥಿತಿಯ ಪ್ರಗತಿ ಪರಿಶೀಲನೆ ಇನ್ನೂ ಬಾಕಿಯಿದೆ. ಜುಲೈ 25ರಂದು ಮುಖ್ಯಮಂತ್ರಿ ಅವರೊಂದಿಗೆ ಬೆಂಗಳೂರು ವಿಭಾಗದ ಪರಿಶೀಲನಾ ಸಭೆ ನಡೆಸಲಾಗುವುದು. ಬಳಿಕ ಮೈಸೂರು ವಿಭಾಗದಲ್ಲೂ ಸಭೆ ನಡೆಸಿ, ರಾಜ್ಯದ ಪರಿಸ್ಥಿತಿಯ ಸಮಗ್ರ ಚಿತ್ರಣ ಪಡೆದು ಮುಂದಿನ ಕ್ರಮಗಳ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ರೈತರು ಹಾಗೂ ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು. ಬರದಿಂದ ಸಂಕಷ್ಟ ಎದುರಿಸುತ್ತಿರುವ ಜನರಿಗೆ ಸರ್ಕಾರ ಎಲ್ಲ ರೀತಿಯ ನೆರವು ನೀಡಲಿದೆ ಎಂದು ಅವರು ಭರವಸೆ ನೀಡಿದರು.

ಉದ್ಯೋಗದ ಕೊರತೆಯಿಂದ ಗ್ರಾಮೀಣ ಪ್ರದೇಶದ ಜನರು ಗುಳೆ ಹೋಗುವುದನ್ನು ತಡೆಯುವ ಉದ್ದೇಶದಿಂದ ಎಲ್ಲ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ (ಸಿಇಒ) ವಿಬಿ-ಜಿ ರಾಮ್ ಜಿ ಯೋಜನೆ ಅಡಿಯಲ್ಲಿ ತಕ್ಷಣ ಉದ್ಯೋಗಾವಕಾಶ ಕಲ್ಪಿಸುವಂತೆ ಸೂಚಿಸಲಾಗಿದೆ ಎಂದು ಪರಮೇಶ್ವರ್ ಹೇಳಿದರು. ಕಾಮಗಾರಿಗಳನ್ನು ಕೂಡಲೇ ಆರಂಭಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದರು.

ಕೇಂದ್ರ ಸರ್ಕಾರದ ನೆರವು ಕುರಿತು ಪ್ರತಿಕ್ರಿಯಿಸಿದ ಅವರು, ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಈಗಾಗಲೇ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು ನೆರವು ಕೋರಲಾಗಿದೆ. ಆದರೆ ಇದುವರೆಗೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಆಗಸ್ಟ್ ತಿಂಗಳಲ್ಲಿ ಕೇಂದ್ರ ಸರ್ಕಾರ ಮನವಿಯನ್ನು ಸ್ವೀಕರಿಸುವ ಸಾಧ್ಯತೆ ಇದ್ದು, ಅಗತ್ಯ ದಾಖಲೆಗಳೊಂದಿಗೆ ಮನವಿ ಸಲ್ಲಿಸಿದ ಬಳಿಕ ಅನುದಾನ ಬಿಡುಗಡೆಯಾಗುವ ನಿರೀಕ್ಷೆಯಿದೆ ಎಂದು ತಿಳಿಸಿದರು.

ಹೆಣ್ಣು ಮಗು ಜನಿಸಿದ್ದಕ್ಕೆ 13 ದಿನಗಳ ಕಂದಮ್ಮನನ್ನೇ ಸಂಪ್ʼಗೆ ಎಸೆದು ಕೊಂದ ಪಾಪಿ ತಂದೆ!

0

ಚಿಕ್ಕಬಳ್ಳಾಪುರ: ಹೆಣ್ಣು ಮಗು ಜನಿಸಿದ್ದಕ್ಕೆ ಕೇವಲ 13 ದಿನಗಳ ಸ್ವಂತ ಮಗುವನ್ನೇ ಸಂಪ್‌ಗೆ ಎಸೆದು ಹತ್ಯೆ ಮಾಡಿರುವ ಅಮಾನವೀಯ ಘಟನೆ ಚಿಕ್ಕಬಳ್ಳಾಪುರ ನಗರದ ಶಾಂತಿನಗರದಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮಗುವಿನ ತಂದೆ ಇಮ್ರಾನ್‌ನನ್ನು ಪೊಲೀಸರು ವಶಕ್ಕೆ ಪಡೆದು ತನಿಖೆ ಆರಂಭಿಸಿದ್ದಾರೆ.

ಇಮ್ರಾನ್ ಮತ್ತು ಮುಸ್ಕಾನ್ ದಂಪತಿಗೆ 13 ದಿನಗಳ ಹಿಂದೆ ಹೆಣ್ಣು ಮಗು ಜನಿಸಿತ್ತು. ಬುಧವಾರ ರಾತ್ರಿ ಮಲಗಿದ್ದ ಮಗುವನ್ನು ಇಮ್ರಾನ್ ಮನೆಯ ಸಂಪ್‌ಗೆ ಎಸೆದಿದ್ದಾನೆ ಎನ್ನಲಾಗಿದೆ.

ಸ್ವಲ್ಪ ಸಮಯದ ಬಳಿಕ ಎದ್ದ ತಾಯಿ ಮುಸ್ಕಾನ್, ಮಗು ಕಾಣಿಸದ ಹಿನ್ನೆಲೆಯಲ್ಲಿ ಪತಿಯನ್ನು ಪ್ರಶ್ನಿಸಿದಾಗ, “ನನಗೆ ಗೊತ್ತಿಲ್ಲ” ಎಂದು ಉತ್ತರಿಸಿದ್ದಾನೆ. ಬಳಿಕ ಕುಟುಂಬದವರೊಂದಿಗೆ ಸೇರಿ ಮಗು ಹುಡುಕುತ್ತಿರುವಂತೆ ನಾಟಕವನ್ನೂ ಆಡಿದ್ದಾನೆ ಎಂದು ತಿಳಿದುಬಂದಿದೆ.

ಕುಟುಂಬದವರಿಗೆ ಅನುಮಾನ ಮೂಡಿದ ಹಿನ್ನೆಲೆಯಲ್ಲಿ ಮನೆಯ ಸಂಪ್‌ನಲ್ಲಿದ್ದ ನೀರನ್ನು ಹೊರಹಾಕಿ ಪರಿಶೀಲಿಸಿದಾಗ, 13 ದಿನಗಳ ಕಂದಮ್ಮನ ಮೃತದೇಹ ಪತ್ತೆಯಾಗಿದೆ. ಈ ಘಟನೆ ಕುಟುಂಬದವರನ್ನು ಶೋಕಸಾಗರಕ್ಕೆ ತಳ್ಳಿದೆ.

ಪ್ರಕರಣ ಸಂಬಂಧ ಚಿಕ್ಕಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಇಮ್ರಾನ್‌ನನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಮಗುವಿನ ಹತ್ಯೆಗೆ ನಿಖರ ಕಾರಣವೇನು ಎಂಬ ಬಗ್ಗೆ ತನಿಖೆ ಮುಂದುವರಿದಿದೆ.

KPSCಯಲ್ಲಿ ಮತ್ತೊಂದು ಬ್ರಹ್ಮಾಂಡ ಅಕ್ರಮ? ಪಶು ವೈದ್ಯಾಧಿಕಾರಿ ಹುದ್ದೆಗೆ 80 ಲಕ್ಷ ರೂ.ಗೆ ಸೀಟ್ ಮಾರಾಟ ಆರೋಪ

ಬೆಂಗಳೂರು: ಸ್ವಜನಪಕ್ಷಪಾತ ಸೇರಿದಂತೆ ವಿವಿಧ ಆರೋಪಗಳ ಹಿನ್ನೆಲೆಯಲ್ಲಿ ಕರ್ನಾಟಕ ಲೋಕಸೇವಾ ಆಯೋಗದ (KPSC) ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತ್ತಿನ ಬೆನ್ನಲ್ಲೇ, ಪಶು ವೈದ್ಯಾಧಿಕಾರಿಗಳ ನೇಮಕಾತಿ ಪ್ರಕ್ರಿಯೆಯಲ್ಲೂ ಅಕ್ರಮ ನಡೆದಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.

ನೇಮಕಾತಿಯಲ್ಲಿ ಭಾರೀ ಗೋಲ್‌ಮಾಲ್ ನಡೆದಿದ್ದು, ಸಂಪೂರ್ಣ ಆಯ್ಕೆ ಪ್ರಕ್ರಿಯೆಯನ್ನು ರದ್ದುಗೊಳಿಸಿ ನ್ಯಾಯಸಮ್ಮತ ತನಿಖೆ ನಡೆಸಬೇಕು ಎಂದು ಅಭ್ಯರ್ಥಿಗಳು ಆಗ್ರಹಿಸಿದ್ದಾರೆ.

ಜನವರಿ 8ರಂದು 400 ಪಶು ವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿಗಾಗಿ ಪರೀಕ್ಷೆ ನಡೆಸಲಾಗಿತ್ತು. ಜುಲೈ 17ರಂದು ಫಲಿತಾಂಶ ಪ್ರಕಟವಾದ ಬಳಿಕ ಹಲವು ಅಭ್ಯರ್ಥಿಗಳು ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಒಂದು ಹುದ್ದೆಗೆ ಸುಮಾರು ₹80 ಲಕ್ಷದವರೆಗೆ ಹಣ ಪಡೆದು ನೇಮಕಾತಿ ನಡೆಸಲಾಗಿದೆ ಎಂಬ ಆರೋಪವೂ ಕೇಳಿಬಂದಿದೆ. ಈ ಸಂಬಂಧ 50ಕ್ಕೂ ಹೆಚ್ಚು ಅಭ್ಯರ್ಥಿಗಳು ವಿಧಾನಸೌಧ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದು, ಪ್ರಕರಣ ಹೊಸ ಚರ್ಚೆಗೆ ಕಾರಣವಾಗಿದೆ.

ಅಭ್ಯರ್ಥಿಗಳ ಆರೋಪದ ಪ್ರಕಾರ, ನೇಮಕಾತಿ ಪ್ರಕ್ರಿಯೆಯಲ್ಲಿ ಸುಮಾರು ಶೇ.60ರಷ್ಟು ಅಕ್ರಮ ನಡೆದಿದೆ. ಈ ಪ್ರಕರಣದಲ್ಲಿ ಅಮಾನತ್ತಾಗಿರುವ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಸೇರಿದಂತೆ ಕೆಲವು ಕೆಪಿಎಸ್‌ಸಿ ಸದಸ್ಯರ ಹೆಸರೂ ಕೇಳಿಬರುತ್ತಿದ್ದು, ಮಧ್ಯವರ್ತಿಗಳ ಮೂಲಕ ಭಾರೀ ಹಣದ ವ್ಯವಹಾರ ನಡೆದಿದೆ ಎಂದು ದೂರಲಾಗಿದೆ.

ವಿದ್ಯಾರ್ಥಿ ಸಂಘಟನೆಯ ಅಧ್ಯಕ್ಷ ಕಾಂತ್ ಕುಮಾರ್ ಮಾತನಾಡಿ, “ಗ್ರೂಪ್–ಎ ಹುದ್ದೆಯಾಗಿರುವ ಪಶು ವೈದ್ಯಾಧಿಕಾರಿ ಹುದ್ದೆಗಳಿಗೆ ಹಣ ನೀಡುವಂತೆ ಅಭ್ಯರ್ಥಿಗಳನ್ನು ಸಂಪರ್ಕಿಸಲಾಗಿದೆ ಎಂಬ ಮಾಹಿತಿ ಇದೆ. ಇಂತಹ ಗಂಭೀರ ಆರೋಪಗಳಿರುವ ಕಾರಣ ಸಂಪೂರ್ಣ ನೇಮಕಾತಿ ಪ್ರಕ್ರಿಯೆಯನ್ನು ರದ್ದುಗೊಳಿಸಿ ಸ್ವತಂತ್ರ ತನಿಖೆ ನಡೆಸಬೇಕು. ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದ್ದಾರೆ.

ಇದೇ ವೇಳೆ, ಪ್ರತಿಭಾವಂತ ಅಭ್ಯರ್ಥಿಗಳು 300ಕ್ಕೂ ಹೆಚ್ಚು ಅಂಕ ಗಳಿಸುವುದೇ ಕಷ್ಟವಾಗಿರುವ ಸಂದರ್ಭದಲ್ಲಿ ಕೆಲವರ ಸಂಬಂಧಿಕರು ಅತಿ ಹೆಚ್ಚು ಅಂಕಗಳೊಂದಿಗೆ ಮೆರಿಟ್ ಪಟ್ಟಿಯಲ್ಲಿ ಸ್ಥಾನ ಪಡೆದಿರುವುದು ಅನುಮಾನಕ್ಕೆ ಕಾರಣವಾಗಿದೆ ಎಂದು ಅಭ್ಯರ್ಥಿಗಳು ಪ್ರಶ್ನಿಸಿದ್ದಾರೆ.

ಹಿಂದೂ ವಿವಾಹ ಪವಿತ್ರ ಸಂಸ್ಕಾರ, ಆಸಕ್ತಿ ಇಲ್ಲವೆಂದು ಸಂಗಾತಿಯನ್ನು ತೊರೆಯಲು ಸಾಧ್ಯವಿಲ್ಲ: ಹೈಕೋರ್ಟ್

ಬೆಂಗಳೂರು: ಹಿಂದೂ ವಿವಾಹವು ಕೇವಲ ಒಪ್ಪಂದವಲ್ಲ, ಅದು ಜೀವಿತಾವಧಿಯ ಪವಿತ್ರ ಸಂಸ್ಕಾರವಾಗಿದೆ. ದಾಂಪತ್ಯ ಜೀವನದಲ್ಲಿ ಆಸಕ್ತಿ ಕಳೆದುಕೊಂಡಿದ್ದೇನೆ ಎಂಬ ಕಾರಣವೊಂದನ್ನೇ ಆಧಾರ ಮಾಡಿಕೊಂಡು ಸಂಗಾತಿಯನ್ನು ತೊರೆಯಲು ಅಥವಾ ವಿಚ್ಛೇದನ ಪಡೆಯಲು ಸಾಧ್ಯವಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.

ಪತ್ನಿಯಿಂದ ವಿಚ್ಛೇದನ ಕೋರಿ ಸಲ್ಲಿಸಿದ್ದ ಪತಿಯ ಮೇಲ್ಮನವಿಯನ್ನು ವಜಾಗೊಳಿಸಿರುವ ನ್ಯಾಯಮೂರ್ತಿಗಳಾದ ಡಿ.ಕೆ. ಸಿಂಗ್ ಹಾಗೂ ಟಿ.ಎಂ. ನದಾಫ್ ಅವರಿದ್ದ ವಿಭಾಗೀಯ ಪೀಠ, ಮೈಸೂರು ಕುಟುಂಬ ನ್ಯಾಯಾಲಯದ ಆದೇಶವನ್ನು ಎತ್ತಿಹಿಡಿದಿದೆ.

ಏನಿದು ಪ್ರಕರಣ?

2003ರ ಡಿಸೆಂಬರ್ 15ರಂದು ಅಂತರ್ಜಾತಿ ಪ್ರೇಮ ವಿವಾಹವಾಗಿದ್ದ ದಂಪತಿ ಸುಮಾರು 21 ವರ್ಷಗಳ ಬಳಿಕ ವೈವಾಹಿಕ ಕಲಹದ ಹಿನ್ನೆಲೆಯಲ್ಲಿ ನ್ಯಾಯಾಲಯದ ಮೆಟ್ಟಿಲೇರಿದ್ದರು. ದಂಪತಿಗೆ ಈಗ ಬಹುತೇಕ ಪ್ರಾಪ್ತವಯಸ್ಕಳಾಗಿರುವ ಮಗಳಿದ್ದಾರೆ.

ಮೊದಲಿಗೆ ಪತಿ ವಿಚ್ಛೇದನಕ್ಕಾಗಿ ಅರ್ಜಿ ಸಲ್ಲಿಸಿದ್ದರೆ, ಪತ್ನಿ ಹಿಂದೂ ವಿವಾಹ ಕಾಯ್ದೆ-1955ರ ಸೆಕ್ಷನ್ 9ರ ಅಡಿಯಲ್ಲಿ ದಾಂಪತ್ಯ ಜೀವನ ಮರುಸ್ಥಾಪನೆಗೆ (Restitution of Conjugal Rights) ಅರ್ಜಿ ಸಲ್ಲಿಸಿದ್ದರು.

ಎರಡೂ ಅರ್ಜಿಗಳನ್ನು ಒಟ್ಟಿಗೆ ವಿಚಾರಣೆ ನಡೆಸಿದ ಮೈಸೂರು ಕುಟುಂಬ ನ್ಯಾಯಾಲಯ, ಪತಿಯ ವಿಚ್ಛೇದನ ಅರ್ಜಿಯನ್ನು ತಿರಸ್ಕರಿಸಿ, ಪತ್ನಿಯ ಅರ್ಜಿಯನ್ನು ಅಂಗೀಕರಿಸಿತ್ತು.

ಮತ್ತೆ ವಿಚ್ಛೇದನಕ್ಕೆ ಅರ್ಜಿ

ನಂತರ ಹಿಂದೂ ವಿವಾಹ ಕಾಯ್ದೆಯ ಸೆಕ್ಷನ್ 13(1A) ಅಡಿಯಲ್ಲಿ, ಮರುಸ್ಥಾಪನೆ ಆದೇಶದ ಬಳಿಕವೂ ಒಂದು ವರ್ಷಕ್ಕಿಂತ ಹೆಚ್ಚು ಕಾಲ ಸಹಜೀವನ ಪುನರಾರಂಭವಾಗಿಲ್ಲ ಎಂಬ ಕಾರಣ ನೀಡಿ ಪತಿ ಮತ್ತೊಮ್ಮೆ ವಿಚ್ಛೇದನ ಕೋರಿ ಅರ್ಜಿ ಸಲ್ಲಿಸಿದ್ದರು.

ಪತ್ನಿಯನ್ನು ಹಲವು ಬಾರಿ ಮನೆಗೆ ಬರಲು ಮನವಿ ಮಾಡಿದ್ದರೂ ಸ್ಪಂದಿಸಿಲ್ಲ. ಹೀಗಾಗಿ ವೈವಾಹಿಕ ಸಂಬಂಧ ಸಂಪೂರ್ಣವಾಗಿ ಮುರಿದುಬಿದ್ದಿದೆ ಎಂದು ಪತಿ ಪರ ವಕೀಲರು ನ್ಯಾಯಾಲಯದಲ್ಲಿ ವಾದ ಮಂಡಿಸಿದ್ದರು.

ಪತ್ನಿಯ ವಾದವೇನು?

ಪತ್ನಿ ಪರವಾಗಿ, ತಾನು ಪತಿ ಹಾಗೂ ಅತ್ತೆ-ಮಾವರನ್ನು ಪ್ರೀತಿ ಮತ್ತು ಗೌರವದಿಂದ ನೋಡಿಕೊಂಡಿದ್ದೇನೆ ಎಂದು ತಿಳಿಸಲಾಯಿತು. ತಾನು ಬ್ರಾಹ್ಮಣ ಸಮುದಾಯಕ್ಕೆ ಸೇರಿದ ಕಾರಣ ಮನೆಯ ಸಂಪ್ರದಾಯಗಳನ್ನು ಪಾಲಿಸಿ ಮೊದಲ ಮಹಡಿಯಲ್ಲಿ ಪೂಜೆ ಹಾಗೂ ಅಡುಗೆ ಮಾಡುವಂತೆ ಪತಿಯ ಪೋಷಕರು ಸೂಚಿಸಿದ್ದನ್ನು ಅನುಸರಿಸಿದ್ದೇನೆ. ಪ್ರತ್ಯೇಕ ಮನೆಗಾಗಿ ಎಂದಿಗೂ ಒತ್ತಾಯಿಸಿಲ್ಲ. ಪತಿ ಅಥವಾ ಅವರ ಕುಟುಂಬದವರೊಂದಿಗೆ ಯಾವುದೇ ಜಗಳವಾಡಿಲ್ಲ ಎಂದು ಪತ್ನಿ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಹೈಕೋರ್ಟ್ ಹೇಳಿದ್ದೇನು?

ಪ್ರಕರಣದ ದಾಖಲೆಗಳನ್ನು ಪರಿಶೀಲಿಸಿದ ಹೈಕೋರ್ಟ್, ಕುಟುಂಬ ನ್ಯಾಯಾಲಯದಲ್ಲಿ ಪತ್ನಿಯ ವಿರುದ್ಧ ಪತಿ ಮಾಡಿದ್ದ ಕ್ರೌರ್ಯದ ಆರೋಪಗಳು ಸಾಬೀತಾಗಿಲ್ಲ ಎಂದು ಗಮನಿಸಿದೆ.

ಇದಲ್ಲದೆ, ವಿಚಾರಣೆ ವೇಳೆ ಪತಿಯೇ “ದಾಂಪತ್ಯ ಜೀವನ ಮುಂದುವರಿಸುವ ಆಸಕ್ತಿ ಇಲ್ಲದ ಕಾರಣ ಸಹಜೀವನ ಪುನರಾರಂಭ ಮಾಡಿಲ್ಲ” ಎಂದು ಒಪ್ಪಿಕೊಂಡಿರುವುದನ್ನೂ ನ್ಯಾಯಪೀಠ ಉಲ್ಲೇಖಿಸಿದೆ.

“ಹಿಂದೂ ವಿವಾಹವು ಕೇವಲ ಒಪ್ಪಂದವಲ್ಲ; ಅದು ಪವಿತ್ರ ಸಂಸ್ಕಾರವಾಗಿದೆ. ದಾಂಪತ್ಯ ಜೀವನದಲ್ಲಿ ಆಸಕ್ತಿ ಇಲ್ಲ ಎಂಬ ಕಾರಣವೊಂದನ್ನೇ ಆಧಾರ ಮಾಡಿಕೊಂಡು ವಿವಾಹ ಬಂಧನದಿಂದ ಹೊರಬರಲು ಸಾಧ್ಯವಿಲ್ಲ” ಎಂದು ಸ್ಪಷ್ಟಪಡಿಸಿದ ಹೈಕೋರ್ಟ್, ಪತಿಯ ಮೇಲ್ಮನವಿಯನ್ನು ವಜಾಗೊಳಿಸಿದೆ.

ಪ್ರಧಾನಿ ನಿವಾಸದ ಬಳಿ ಕಾಂಗ್ರೆಸ್ ಪ್ರತಿಭಟನೆ ಪ್ರಾಮಾಣಿಕತೆಯಿಂದ ಕೂಡಿಲ್ಲ; ವಾಂಗ್ಚುಕ್ ಪತ್ನಿ ವಾಗ್ದಾಳಿ

0

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸದ ಬಳಿ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ನಾಯಕರು ನಡೆಸಿದ ಪ್ರತಿಭಟನೆಗೆ ಶಿಕ್ಷಣ ತಜ್ಞೆ ಹಾಗೂ ಸಾಮಾಜಿಕ ಉದ್ಯಮಿಯಾಗಿರುವ ಗೀತಾಂಜಲಿ ಜೆ. ಅಂಗ್ಮೊ ತೀವ್ರ ಟೀಕೆ ವ್ಯಕ್ತಪಡಿಸಿದ್ದಾರೆ. ಪ್ರಸಿದ್ಧ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿಯಾಗಿರುವ ಅವರು, ಈ ಪ್ರತಿಭಟನೆ ಪ್ರಾಮಾಣಿಕತೆಯಿಂದ ಕೂಡಿರಲಿಲ್ಲ ಎಂದು ಆರೋಪಿಸಿದ್ದಾರೆ.

ಮಾಧ್ಯಮಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಗೀತಾಂಜಲಿ, ಜುಲೈ 21ರಂದು ನಡೆದ ಪ್ರತಿಭಟನೆಯಲ್ಲಿ ರಾಹುಲ್ ಗಾಂಧಿ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರನ್ನು ಪೊಲೀಸರು ವಶಕ್ಕೆ ಪಡೆದ ಘಟನೆಗೆ ಪ್ರತಿಕ್ರಿಯಿಸಿ, ರಾಜಕೀಯ ಪ್ರದರ್ಶನ ಮಾಡುವ ಬದಲು ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ವಿದ್ಯಾರ್ಥಿಗಳ ಜೊತೆ ಕಾಂಗ್ರೆಸ್ ನಾಯಕರು ಸೇರಬೇಕಿತ್ತು ಎಂದು ಹೇಳಿದ್ದಾರೆ.

ಅಲ್ಲದೆ, ಸೋನಮ್ ವಾಂಗ್ಚುಕ್ ಅವರ ಹೆಸರು ಮತ್ತು ಪ್ರತಿಷ್ಠೆಯನ್ನು ಕೆಲವು ರಾಜಕಾರಣಿಗಳು ತಮ್ಮ ರಾಜಕೀಯ ಸ್ವಾರ್ಥಕ್ಕಾಗಿ ಬಳಸಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದ ಅವರು, ದೇಶದ ಜನರನ್ನು ಇನ್ನು ಮುಂದೆ ಈ ರೀತಿಯಾಗಿ ದಾರಿ ತಪ್ಪಿಸಲು ಸಾಧ್ಯವಿಲ್ಲ ಎಂದು ಹೇಳಿದರು.

“ನಮಗೆ ಆಡಳಿತ ಪಕ್ಷವೂ ಇಲ್ಲ, ವಿರೋಧ ಪಕ್ಷವೂ ಇಲ್ಲ. ನಮ್ಮ ಪಾಲಿಗೆ ಸಂಸತ್ತೇ ಅತ್ಯುನ್ನತ ಸಂಸ್ಥೆ. ಶಿಕ್ಷಣವನ್ನು ರಾಷ್ಟ್ರದ ಅತ್ಯಂತ ಪ್ರಮುಖ ವಿಷಯವಾಗಿ ಸಂಸತ್ತು ಪರಿಗಣಿಸಬೇಕು ಎಂಬುದೇ ನಮ್ಮ ಆಶಯ” ಎಂದು ಗೀತಾಂಜಲಿ ಅಂಗ್ಮೊ ತಿಳಿಸಿದರು.

ಇದೇ ವೇಳೆ, ಪ್ರಾಮಾಣಿಕತೆ ಇಲ್ಲದ ರಾಜಕಾರಣಿಗಳನ್ನು ದೇಶದ ಯುವಜನತೆಯೇ ತಿರಸ್ಕರಿಸಲಿದ್ದಾರೆ ಎಂದು ಅಭಿಪ್ರಾಯಪಟ್ಟ ಅವರು, ಯಾವುದೇ ರಾಜಕೀಯ ಉದ್ದೇಶವಿಲ್ಲದೆ ವಿದ್ಯಾರ್ಥಿ ಚಳವಳಿಗೆ ಬೆಂಬಲ ನೀಡಲು ಬರುವ ಎಲ್ಲರನ್ನೂ ಸ್ವಾಗತಿಸಲಾಗುತ್ತದೆ ಎಂದು ಸ್ಪಷ್ಟಪಡಿಸಿದರು.

ಮೇಘಾಲಯ ಹನಿಮೂನ್ ಹತ್ಯೆ ಪ್ರಕರಣ: ಸೋನಂ ರಘುವಂಶಿ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ನವದೆಹಲಿ: ದೇಶಾದ್ಯಂತ ಸಂಚಲನ ಮೂಡಿಸಿದ್ದ ಮೇಘಾಲಯ ಹನಿಮೂನ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸೋನಂ ರಘುವಂಶಿಗೆ ಸುಪ್ರೀಂ ಕೋರ್ಟ್ ಭಾರೀ ಹಿನ್ನಡೆ ನೀಡಿದ್ದು, ಅವರಿಗೆ ನೀಡಲಾಗಿದ್ದ ಜಾಮೀನನ್ನು ರದ್ದುಪಡಿಸಿದೆ.

ವಿಚಾರಣಾ ನ್ಯಾಯಾಲಯ ನೀಡಿದ್ದ ಜಾಮೀನು ಆದೇಶವನ್ನು ಮೇಘಾಲಯ ಹೈಕೋರ್ಟ್ ಎತ್ತಿಹಿಡಿದಿತ್ತು. ಈ ತೀರ್ಪನ್ನು ಪ್ರಶ್ನಿಸಿ ಮೇಘಾಲಯ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಎಂ.ಎಂ. ಸುಂದ್ರೇಶ್ ಹಾಗೂ ಪಿ.ಬಿ. ವರಾಲೆ ಅವರನ್ನೊಳಗೊಂಡ ಪೀಠ ಜಾಮೀನು ರದ್ದುಪಡಿಸಿ ಆದೇಶ ಹೊರಡಿಸಿದೆ.

ಆರೋಪಿ ಸೋನಂ ರಘುವಂಶಿ ಅವರು ಮೂರು ವಾರಗಳೊಳಗೆ ತನಿಖಾ ಸಂಸ್ಥೆ ಅಥವಾ ಸಂಬಂಧಪಟ್ಟ ನ್ಯಾಯಾಲಯದ ಮುಂದೆ ಶರಣಾಗಬೇಕು ಎಂದು ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ.

ತೀರ್ಪು ನೀಡುವ ವೇಳೆ ನ್ಯಾಯಪೀಠ, ಸೋನಂ ರಘುವಂಶಿ ವಿರುದ್ಧದ ಆರೋಪಗಳು ಅತ್ಯಂತ ಗಂಭೀರ ಸ್ವರೂಪದ್ದಾಗಿವೆ ಎಂದು ಅಭಿಪ್ರಾಯಪಟ್ಟಿದೆ. ಪ್ರಕರಣದ ವಿಚಾರಣೆ ಪೂರ್ಣಗೊಳ್ಳುವವರೆಗೆ ಜಾಮೀನು ನೀಡಲು ಅವಕಾಶವಿಲ್ಲ ಎಂದು ತಿಳಿಸಿದೆ.

ಆದರೆ, ವಿಚಾರಣೆಯಲ್ಲಿ ವಿಳಂಬವಾದರೆ ಆರು ತಿಂಗಳ ಬಳಿಕ ಮತ್ತೆ ಜಾಮೀನಿಗಾಗಿ ಅರ್ಜಿ ಸಲ್ಲಿಸಲು ಅವಕಾಶವಿದೆ ಎಂದು ನ್ಯಾಯಪೀಠ ಸ್ಪಷ್ಟಪಡಿಸಿದೆ.

ಏನಿದು ಪ್ರಕರಣ?

ಮಧ್ಯಪ್ರದೇಶದ ಇಂದೋರ್ ಮೂಲದ ಸೋನಂ ರಘುವಂಶಿ ಮತ್ತು ರಾಜಾ ರಘುವಂಶಿ ದಂಪತಿ 2025ರ ಮೇ 23ರಂದು ಹನಿಮೂನ್‌ಗಾಗಿ ಮೇಘಾಲಯದ ಸೋಹ್ರಾ (ಚೆರಾಪುಂಜಿ) ಪ್ರದೇಶಕ್ಕೆ ತೆರಳಿದ್ದರು. ಬಳಿಕ ಇಬ್ಬರೂ ನಾಪತ್ತೆಯಾಗಿದ್ದು, ಜೂನ್ 2ರಂದು ರಾಜಾ ರಘುವಂಶಿ ಅವರ ಮೃತದೇಹ ಆಳವಾದ ಕಂದಕದಲ್ಲಿ ಪತ್ತೆಯಾಗಿತ್ತು.

ತನಿಖೆ ವೇಳೆ, ಆರ್ಥಿಕ ಲಾಭದ ಉದ್ದೇಶದಿಂದ ಸೋನಂ ರಘುವಂಶಿ ಬಾಡಿಗೆ ಹಂತಕರೊಂದಿಗೆ ಸೇರಿ ಪತಿಯ ಕೊಲೆಗೆ ಸಂಚು ರೂಪಿಸಿದ್ದರು ಎಂದು ಮೇಘಾಲಯ ಪೊಲೀಸರು ಆರೋಪಿಸಿದ್ದಾರೆ. ಈ ಪ್ರಕರಣ ದೇಶಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿತ್ತು.

ಪ್ರಶ್ನೆ ಪತ್ರಿಕೆ ಸೋರಿಕೆ ಬಗ್ಗೆ ಮೋದಿ ಮೊದಲೇ ಮಾತನಾಡಬೇಕಿತ್ತು: ಸಿಎಂ ಡಿ.ಕೆ. ಶಿವಕುಮಾರ್ ಕಿಡಿ

ಬೆಂಗಳೂರು: ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ಪ್ರಧಾನಿ ನರೇಂದ್ರ ಮೋದಿಯವರು ಈಗ ಮಾತನಾಡುವ ಬದಲು ಪ್ರಾರಂಭದಲ್ಲೇ ಮಾತನಾಡಬೇಕಿತ್ತು. ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು. ಯಾರನ್ನೂ ಕಾಪಾಡುವ ಪ್ರಶ್ನೆಯೇ ಕೇಂದ್ರ ಸರ್ಕಾರದ ಮುಂದಿರಬಾರದು” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಆಗ್ರಹಿಸಿದರು. ಬೆಂಗಳೂರಿನ ಕೆ ಜಿ ರಸ್ತೆ ಬಳಿ ಮಾಧ್ಯಮಗಳಿಗೆ ಶಿವಕುಮಾರ್ ಅವರು ಗುರುವಾರ ಪ್ರತಿಕ್ರಿಯೆ ನೀಡಿದರು.

“ಬಿಜೆಪಿಯವರೇ ನಿಮ್ಮ ಮಕ್ಕಳೂ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ದೇಶದ ಯುವ ಜನತೆಯ ಭವಿಷ್ಯ ಹಾಳಾಗುತ್ತಿದೆ. ವೈಫಲ್ಯವನ್ನು ಬಿಜೆಪಿಯವರು ಒಪ್ಪಿಕೊಳ್ಳಬೇಕು. ಒಬ್ಬ ವ್ಯಕ್ತಿ ರಾಜಿನಾಮೆ ಕೊಡುವುದರಿಂದ ಏನಾಗಲಿದೆ? ಪ್ರಶ್ನೆ ಪತ್ರಿಕೆಗಳು ಸೋರಿಕೆಯಾದಾಗ ಇಂತಹ ಘಟನೆ ಬಗ್ಗೆ ಯಾರಾದರೂ ಜವಾಬ್ದಾರಿ ಹೊರಬೇಕಲ್ಲವೇ? ಇದಕ್ಕೆ ಯಾರು ಹೊಣೆ?” ಎಂದು ಕಿಡಿಕಾರಿದರು.

“ಪ್ರಶ್ನೆ ಪತ್ರಿಕೆ ಸೋರಿಕೆ ಬಗ್ಗೆ ಸಂಸತ್ತಿನಲ್ಲಿ ಚರ್ಚೆಯಾಗಲಿ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲವೂ ಚರ್ಚೆಯಾಗಬೇಕು. ಟೀಕೆ ಮಾಡಿದಾಗ ನಾವು ಹಾಗೂ ನೀವು ಇಬ್ಬರೂ ಒಪ್ಪಿ ತಿದ್ದಿಕೊಳ್ಳಬೇಕು. ನಾವು ಯುವಕರ ಭವಿಷ್ಯದ ಬಗ್ಗೆ ಆಲೋಚನೆ ಮಾಡುತ್ತಿದ್ದೇವೆ. ಈಗಾಗಲೇ ಸುಮಾರು 100 ಕ್ಕೂ ಹೆಚ್ಚು ಪರೀಕ್ಷೆಗಳ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗಿವೆ” ಎಂದರು.

ಪ್ರಶ್ನೆ ಪತ್ರಿಕೆ ಸೋರಿಕೆ ರಾಜಕೀಯ ವಿಚಾರವಲ್ಲ

“ಪ್ರಶ್ನೆ ಪತ್ರಿಕೆ ಸೋರಿಕೆ ಎಂಬುದು ರಾಜಕೀಯ ಪಕ್ಷಗಳ ವಿಚಾರವಲ್ಲ, ದೇಶದ ಭವಿಷ್ಯದ ವಿಚಾರ. ಪಾರದರ್ಶಕ, ಶಕ್ತಿಯುತ, ಉತ್ತಮ ಗುಣಮಟ್ಟದ ಶಿಕ್ಷಣ ದೊರೆಯುವಂತೆ ಮಾಡುವುದು ನಮ್ಮೆಲ್ಲರ ಜವಾಬ್ದಾರಿ. ಯಾವುದೇ ಪರೀಕ್ಷೆಗಳು ನಡೆದರು ಅವು ಪಾರದರ್ಶಕವಾಗಿರಬೇಕು. ಇಡೀ ಪ್ರಪಂಚ ಭಾರತದ ಯುವ ಜನತೆಯ ಭವಿಷ್ಯದ ಬಗ್ಗೆ ಆಲೋಚನೆ ಮಾಡುತ್ತಿದೆ. ನಮ್ಮ ದೇಶ ಪ್ರತಿಭಾವಂತರ ದೇಶ. ಇಡೀ ಪ್ರಪಂಚದಲ್ಲಿಯೇ ನಮ್ಮಲ್ಲಿ ಇರುವಷ್ಟು ಪ್ರತಿಭೆಗಳು ಎಲ್ಲಿಯೂ ಇಲ್ಲ ಎಂದು ಅನೇಕರು ಒಪ್ಪಿಕೊಂಡಿದ್ದಾರೆ. ನಮ್ಮನ್ನು ಇಡೀ ಪ್ರಪಂಚವೇ ನೋಡುತ್ತಿರುವ ಹೊತ್ತಿನಲ್ಲಿ ನಮ್ಮ ಶಿಕ್ಷಣದ ಗುಣಮಟ್ಟವನ್ನು ನಾವು ಕಾಪಾಡಬೇಕಿದೆ” ಎಂದರು.

ಮಾಧ್ಯಮಗಳು ಪ್ರಶ್ನೆ ಮಾಡಬೇಕಿತ್ತು

“ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಭಟನೆ ಮಾಡುವುದು ಪ್ರತಿಪಕ್ಷಗಳ, ಎಲ್ಲರ, ಯುಜನತೆಯ ಹಕ್ಕು. ಇಂತಹ ಸಂದರ್ಭದಲ್ಲಿ ಅವರ ಮೇಲೆ ಲಾಠಿಚಾರ್ಜ್ ಮಾಡಲಾಗಿದೆ, ತೊಂದರೆ ನೀಡಲಾಗಿದೆ. ಸುದ್ದಿ ಮಾಧ್ಯಮಗಳ ಮೇಲೆ ನಿರ್ಬಂದ ಹೇರಿ, ಧಮ್ಕಿ ಹಾಕಿ ಪ್ರಸಾರ ಆಗದಂತೆ ನೋಡಿಕೊಳ್ಳಲಾಗಿದೆ. ಅಲ್ಲಿದ್ದವರು ಮಾಡಿದ ವಿಡಿಯೋಗಳು ಯೂಟ್ಯೂಬ್ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿವೆ. ಮಾಧ್ಯಮಗಳು ಪ್ರಜಾಪ್ರಭುತ್ವದ ಅಂಗ. ಹೀಗಿದ್ದಾಗ ಮಾಧ್ಯಮಗಳು ಪ್ರಶ್ನೆ ಮಾಡದೇ ಏನು ಮಾಡುತ್ತಿದ್ದವು. ನೀವುಗಳು ಏಕೆ ಪ್ರತಿಭಟನೆ ಮಾಡಲಿಲ್ಲ. ಪ್ರಶ್ನೆ ಮಾಡದ ನಿಮ್ಮಗಳ ತಪ್ಪೂ ಇದೇ. ಸಾಮಾಜಿಕ ಜಾಲತಾಣದಲ್ಲಿ ಬಂದ ಮೇಲೆ ಮಾಧ್ಯಮಗಳು ವಿಷಯಗಳನ್ನು ಎತ್ತಿಕೊಂಡಿವೆ. ಇದು ಹೊಸ ತಲೆಮಾರಿನ ಹೋರಾಟ” ಎಂದರು.

ಮೊಟ್ಟೆ ಹೊಡೆದಿದ್ದು ಸರಿಯಲ್ಲ

“ನಾವೂ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ಪ್ರತಿಭಟನೆ ಮಾಡಿದ್ದೇವೆ. ಮಂಗಳವಾರದಂದು ಕಾಂಗ್ರೆಸ್ ಕಚೇರಿ ಬಳಿ ಮೊಟ್ಟೆ ಹೊಡೆದಿದ್ದನ್ನು ಸರಿ ಎಂದು ಹೇಳುವುದಿಲ್ಲ. ಕಾನೂನಿನ ಪ್ರಕಾರ ಯಾವ ಕ್ರಮ ತೆಗೆದುಕೊಳ್ಳಲಾಗುವುದು ಎಂದು ನಮ್ಮ ಗೃಹಸಚಿವರು ಈಗಾಗಲೇ ತಿಳಿಸಿದ್ದಾರೆ. ಬಿಜೆಪಿಯವರು ಹಿಂದೆ ಏನೇನು ಮಾಡಿದ್ದರು ಎಂದು ಅವರೂ ನೆನಪಿನಲ್ಲಿ ಇಟ್ಟುಕೊಳ್ಳಬೇಕು. ಲಾಠಿ, ಮಚ್ಚು, ರೈಫಲ್ ಗಳು ಸಿಕ್ಕಿದ್ದವು. ಪೊನ್ನಂಪೇಟೆಯ ಶಾಲೆಯ ಆವರಣದಲ್ಲಿ ರೈಫಲ್ ತರಭೇತಿ ನೀಡಿದ್ದರು. ನಿಮ್ಮದೂ ಇತಿಹಾಸಗಳಿವೆ” ಎಂದರು.

ರಾಜ್ಯದಲ್ಲಿ ಕೊತ್ವಾಲ್ ಆಡಳಿತ ನಡೆಯುತ್ತಿದೆ ಎನ್ನುವ ಬಿಜೆಪಿ ಹೇಳಿಕೆ ಬಗ್ಗೆ ಕೇಳಿದಾಗ, “ಅವರ ಖುಷಿಗೆ ಏನು ಬೇಕಾದರೂ, ಹೆಂಗೆ ಬೇಕಾದರೂ ಮಾತನಾಡಿಕೊಳ್ಳಲಿ. ನಾನು ಈ ಸ್ಥಾನಕ್ಕೆ ಬರಲು ವಿದ್ಯಾರ್ಥಿ ನಾಯಕನಾಗಿ ಬೆಳೆದವನು. ಹಳ್ಳಿಯಲ್ಲಿ ಹುಟ್ಟಿದ ನಾನು ಪರಿಶುದ್ಧವಾದ ರಾಜಕಾರಣ, ಆಡಳಿತ ಮಾಡುತ್ತಿದ್ದೇನೆ. ಇದನ್ನು ಅವರ ಕೈಯಲ್ಲಿ ತಡೆದುಕೊಳ್ಳಲು ಆಗುತ್ತಿಲ್ಲ ಎಂದರೆ ಏನು ಮಾಡಲು ಆಗುವುದಿಲ್ಲ” ಎಂದು ವ್ಯಂಗ್ಯವಾಡಿದರು.