ಬೆಂಗಳೂರು: ರಾಜ್ಯ ಸರ್ಕಾರ ರಚಿಸಿರುವ ಗ್ಯಾರಂಟಿ ಅನುಷ್ಠಾನ ಸಮಿತಿಗಳ ಕಾರ್ಯವೈಖರಿ ಹಾಗೂ ಅವುಗಳ ಮೇಲಿನ ವೆಚ್ಚದ ಕುರಿತು ಬಿಜೆಪಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಕಳೆದ ಮೂರು ವರ್ಷಗಳಲ್ಲಿ ಈ ಸಮಿತಿಗಳ ನಿರ್ವಹಣೆಗೆ ಸುಮಾರು 100 ಕೋಟಿ ರೂಪಾಯಿ ವೆಚ್ಚ ಮಾಡಲಾಗಿದ್ದು, ಸಮಿತಿಗಳು ನಿರೀಕ್ಷಿತ ಮಟ್ಟದಲ್ಲಿ ಕಾರ್ಯನಿರ್ವಹಿಸಿಲ್ಲ ಎಂದು ಬಿಜೆಪಿ ರಾಜ್ಯ ವಕ್ತಾರ ಎಸ್. ಪ್ರಕಾಶ್ ಆರೋಪಿಸಿದ್ದಾರೆ.
ನಗರದ ಜಗನ್ನಾಥ ಭವನದಲ್ಲಿರುವ ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಗೃಹಲಕ್ಷ್ಮಿ ಯೋಜನೆಯಡಿ 3ರಿಂದ 4 ಲಕ್ಷ ಅನರ್ಹ ಹಾಗೂ ಅಪಾತ್ರ ಫಲಾನುಭವಿಗಳ ಹೆಸರನ್ನು ಸರ್ಕಾರ ಇದೀಗ ಪಟ್ಟಿಯಿಂದ ತೆಗೆದುಹಾಕಲು ಮುಂದಾಗಿರುವುದೇ ಅನುಷ್ಠಾನ ಸಮಿತಿಗಳ ವೈಫಲ್ಯಕ್ಕೆ ಸ್ಪಷ್ಟ ಉದಾಹರಣೆ ಎಂದು ಹೇಳಿದರು.
ಅನುಷ್ಠಾನ ಸಮಿತಿಯ ಪದಾಧಿಕಾರಿಗಳಿಗೆ ಸಂಪುಟ ದರ್ಜೆಯ ಸ್ಥಾನಮಾನ ನೀಡಲಾಗಿದ್ದು, ಪ್ರತಿ ವಿಧಾನಸಭಾ ಕ್ಷೇತ್ರದಲ್ಲೂ ನೇಮಕಾತಿ ಮಾಡಲಾಗಿದೆ. ಅವರಿಗೆ ಸಂಬಳ, ಪ್ರವಾಸ ಭತ್ಯೆ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ. ಈ ಸಮಿತಿಗಳ ನಿರ್ವಹಣೆಗೆ ವರ್ಷಕ್ಕೆ ಸುಮಾರು 35 ಕೋಟಿ ರೂಪಾಯಿ ವೆಚ್ಚವಾಗುತ್ತಿದೆ ಎಂದು ಅವರು ತಿಳಿಸಿದರು.
ಸಮಿತಿಗಳು ಇದುವರೆಗೆ ಒಂದೇ ಒಂದು ಅರ್ಹ ಫಲಾನುಭವಿಯ ಹೆಸರನ್ನು ಸೇರ್ಪಡೆಗೊಳಿಸಿಲ್ಲ ಹಾಗೂ ಅನರ್ಹ ಫಲಾನುಭವಿಯ ಹೆಸರನ್ನು ರದ್ದುಪಡಿಸಲು ಯಾವುದೇ ಶಿಫಾರಸು ಮಾಡಿಲ್ಲ ಎಂದು ಆರೋಪಿಸಿದ ಎಸ್. ಪ್ರಕಾಶ್, “ಸರ್ಕಾರದ ಸೌಲಭ್ಯಗಳನ್ನು ಪಡೆದು ಯಾವುದೇ ಪರಿಣಾಮಕಾರಿ ಕೆಲಸ ಮಾಡದಿದ್ದರೆ ಇಂತಹ ಸಮಿತಿಗಳ ಅಗತ್ಯವೇನು?” ಎಂದು ಪ್ರಶ್ನಿಸಿದರು.
ಅನುಷ್ಠಾನ ಸಮಿತಿ ಉಪಾಧ್ಯಕ್ಷ ಮೆಹ್ರಾಜ್ ಖಾನ್ ಅವರಿಗೆ ಬೆಂಗಳೂರಿನ ಜಯಮಹಲ್ ಪ್ರದೇಶದಲ್ಲಿ ಸರ್ಕಾರಿ ನಿವಾಸ ಒದಗಿಸಿರುವುದನ್ನೂ ಅವರು ಟೀಕಿಸಿದರು. ಮೇಲ್ಮನೆ ಹಾಗೂ ಕೆಳಮನೆ ವಿರೋಧ ಪಕ್ಷದ ನಾಯಕರಿಗೆ ಸಮರ್ಪಕ ವಸತಿ ಸೌಲಭ್ಯ ದೊರೆಯದಿರುವ ಸಂದರ್ಭದಲ್ಲಿ ಈ ರೀತಿಯ ಕ್ರಮಗಳು ಸರ್ಕಾರಿ ಸಂಪನ್ಮೂಲಗಳ ದುರುಪಯೋಗಕ್ಕೆ ಕಾರಣವಾಗುತ್ತಿವೆ ಎಂದು ಆರೋಪಿಸಿದರು.

