Home Blog

ಕದ್ರಿ ಶ್ರೀ ಮಂಜುನಾಥನ ದರ್ಶನ ಪಡೆದ ಡಿಕೆಶಿ; ನಾಡಿನ ಒಳಿತಿಗಾಗಿ ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಕೆ!

0

ಮಂಗಳೂರು: ಸಚಿವ ಸಂಪುಟ ಸಭೆಯ ಹಿನ್ನೆಲೆಯಲ್ಲಿ ಮಂಗಳೂರಿಗೆ ಆಗಮಿಸಿರುವ ಡಿಕೆ ಶಿವಕುಮಾರ್ ಅವರು ಶತಮಾನಗಳಷ್ಟು ಪುರಾತನವಾದ ಪ್ರಸಿದ್ಧ ಕದ್ರಿ ಶ್ರೀ ಮಂಜುನಾಥ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಪ್ರಾರ್ಥನೆ ಸಲ್ಲಿಸಿ ದೇವರ ದರ್ಶನ ಪಡೆದ ಅವರು, ನಾಡಿನ ಸಮಸ್ತ ಜನರ ಒಳಿತಿಗಾಗಿ, ಉತ್ತಮ ಮಳೆ-ಬೆಳೆ ಹಾಗೂ ರಾಜ್ಯದ ಸಮೃದ್ಧಿಗಾಗಿ ದೇವರಲ್ಲಿ ಬೇಡಿಕೊಂಡಿದ್ದಾರೆ.

ಕದ್ರಿ ಶ್ರೀ ಮಂಜುನಾಥನ ದರ್ಶನ, ವಿಶೇಷ ಪೂಜೆ: ದೇವಸ್ಥಾನಕ್ಕೆ ಭೇಟಿ ನೀಡಿದ ಅವರು, ಮೊದಲು ಕದ್ರಿ ದೇವಸ್ಥಾನದ ಗಣಪತಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ದುರ್ಗಾಪರಮೇಶ್ವರಿ ಅಮ್ಮನವರ ಗುಡಿಯಲ್ಲೂ ಪೂಜೆ ಸಲ್ಲಿಸಿ, ನಂತರ ಕದ್ರಿ ಮಂಜುನಾಥ ಸ್ವಾಮಿಯ ದರ್ಶನ ಪಡೆದರು. ಸಚಿವ ಸಂಪುಟ ಸಭೆಯು ನಿರ್ವಿಘ್ನವಾಗಿ ಹಾಗೂ ಯಶಸ್ವಿಯಾಗಿ ನಡೆಯಲಿ ಎಂದು ಪ್ರಾರ್ಥಿಸಿದರು. ಈ ಕುರಿತ ಫೋಟೋಗಳನ್ನು ತಮ್ಮ ಅಧಿಕೃತ ಸೋಶಿಯಲ್ ಮೀಡಿಯಾ ‘ಎಕ್ಸ್’ (ಟ್ವಿಟರ್) ಖಾತೆಯಲ್ಲೂ ಹಂಚಿಕೊಂಡಿದ್ದಾರೆ.

ತಣ್ಣೀರುಬಾವಿ ಬೀಚ್‌ನಲ್ಲಿ ಔತಣಕೂಟ, ಕಂಬಳ-ದೈವಾರಾಧನೆ ಪರಿಕರ ವೀಕ್ಷಣೆ: ಕದ್ರಿ ದೇವಸ್ಥಾನದ ಸನ್ನಿಧಾನಕ್ಕೆ ಭೇಟಿ ನೀಡುವ ಮುನ್ನ ಡಿಕೆ ಶಿವಕುಮಾರ್ ಅವರು ತಣ್ಣೀರುಬಾವಿ ಬೀಚ್‌ನಲ್ಲಿ ಆಯೋಜಿಸಲಾಗಿದ್ದ ಔತಣಕೂಟದಲ್ಲಿ ಭಾಗವಹಿಸಿದ್ದರು.

ಈ ವೇಳೆ ತುಳುನಾಡಿನ ಸಾಂಸ್ಕೃತಿಕ ಹೆಮ್ಮೆಯಾದ ದೈವಾರಾಧನೆ ಹಾಗೂ ಕಂಬಳದ ಪಾರಂಪರಿಕ ಪರಿಕರಗಳ ಪ್ರದರ್ಶನವನ್ನು ಅತ್ಯಂತ ಕುತೂಹಲದಿಂದ ವೀಕ್ಷಿಸಿ ಸಂತಸ ವ್ಯಕ್ತಪಡಿಸಿದರು. ಕೊಂಬು ಊದಿ, ದೈವದ ಗಗ್ಗರವನ್ನು ಕೈಯಲ್ಲಿ ಹಿಡಿದು ಅದರ ನಾದಕ್ಕೆ ಮನಸೋತರು. ಜೊತೆಗೆ ಕಂಬಳದ ನೇಗಿಲು ಹಾಗೂ ಇತರ ಪ್ರಾಚೀನ ವಸ್ತುಗಳನ್ನು ವೀಕ್ಷಿಸುತ್ತಾ, ಸಮುದ್ರದ ನೈಸರ್ಗಿಕ ಸೌಂದರ್ಯವನ್ನು ಆನಂದಿಸುತ್ತಾ ಔತಣ ಸವಿದರು.

ಸೆ.19ರಂದು ತೀರ್ಥಹಳ್ಳಿಗೆ ಸಿಎಂ ಭೇಟಿ: ಮುನ್ನೆಚ್ಚರಿಕೆ ಕ್ರಮವಾಗಿ 3 ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ!

0

ಶಿವಮೊಗ್ಗ: ಕಸ್ತೂರಿ ರಂಗನ್ ವರದಿ ಕುರಿತು ರೈತರೊಂದಿಗೆ ಚರ್ಚಿಸಲು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸೆಪ್ಟೆಂಬರ್ 19ರಂದು ತೀರ್ಥಹಳ್ಳಿಗೆ ಭೇಟಿ ನೀಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರ ಹೆಚ್ಚಿನ ಸಂಖ್ಯೆಯ ಭಾಗವಹಿಸುವಿಕೆ ಹಾಗೂ ವಾಹನ ಸಂಚಾರ ಹೆಚ್ಚಾಗುವ ಸಾಧ್ಯತೆಯನ್ನು ಗಮನದಲ್ಲಿಟ್ಟುಕೊಂಡು ಮೂರು ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ.

ತೀರ್ಥಹಳ್ಳಿಯ ಸರ್ಕಾರಿ ಪದವಿ ಪೂರ್ವ ಕಾಲೇಜು ಹಾಗೂ ಯು.ಆರ್. ಅನಂತಮೂರ್ತಿ ಪ್ರೌಢಶಾಲೆಗೆ ರಜೆ ಘೋಷಿಸಲಾಗಿದೆ. ಇದರ ಜೊತೆಗೆ ಬಾಳೇಬೈಲು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೂ ರಜೆ ನೀಡಲಾಗಿದೆ. ತಹಶೀಲ್ದಾರ್ ರಂಜಿತ್ ಅವರು ಈ ಕುರಿತು ಆದೇಶ ಹೊರಡಿಸಿದ್ದಾರೆ.

ಸಿಎಂ ಡಿ.ಕೆ. ಶಿವಕುಮಾರ್ ಅವರ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸುವ ನಿರೀಕ್ಷೆಯಿದೆ. ಇದರಿಂದ ತೀರ್ಥಹಳ್ಳಿ ಭಾಗದಲ್ಲಿ ವಾಹನ ಸಂಚಾರ ಹೆಚ್ಚಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಎರಡು ಕಾಲೇಜುಗಳು ಹಾಗೂ ಒಂದು ಪ್ರೌಢಶಾಲೆಗೆ ರಜೆ ಘೋಷಿಸಲಾಗಿದೆ.

ಕಸ್ತೂರಿ ರಂಗನ್ ವರದಿ ಸೇರಿದಂತೆ ಪರಿಸರ ಸಂಬಂಧಿತ ವಿಚಾರಗಳ ಕುರಿತು ರೈತರೊಂದಿಗೆ ಚರ್ಚಿಸಲು ಸಿಎಂ ತೀರ್ಥಹಳ್ಳಿಗೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

ಸಿನಿರಸಿಕರಿಗೆ ಬೆಲೆ ಏರಿಕೆ ಶಾಕ್: ಸಿನಿಮಾ ಟಿಕೆಟ್ ಮೇಲೆ ಶೇ. 2 ಹೆಚ್ಚುವರಿ ಸೆಸ್ ಜಾರಿಗೆ ರಾಜ್ಯ ಸರ್ಕಾರ ನಿರ್ಧಾರ!

0

ಬೆಂಗಳೂರು: ರಾಜ್ಯದ ಸಿನಿಮಾ ಪ್ರೇಕ್ಷಕರಿಗೆ ಸರ್ಕಾರ ಬಿಗ್ ಶಾಕ್ ನೀಡಿದ್ದು, ಸಿನಿಮಾ ಟಿಕೆಟ್‌ಗಳ ಮೇಲೆ ಶೇ. 2ರಷ್ಟು ಹೆಚ್ಚುವರಿ ಸೆಸ್ (ಉಪಕರ) ವಿಧಿಸಲು ಮಹತ್ವದ ನಿರ್ಧಾರ ಕೈಗೊಂಡಿದೆ. ಈ ಹೊಸ ನಿಯಮವು ಸೆಪ್ಟೆಂಬರ್ 30 ರಿಂದ ಅಧಿಕೃತವಾಗಿ ಜಾರಿಗೆ ಬರಲಿದೆ.

2024ರ ವಿಧೇಯಕಕ್ಕೆ ಕೊನೆಗೂ ಚಾಲನೆ: ರಾಜ್ಯ ಸರ್ಕಾರವು 2024 ರಲ್ಲಿ ಮಂಡಿಸಿದ್ದ ‘ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ವಿಧೇಯಕ’ಕ್ಕೆ ಕೊನೆಗೂ ಚಾಲನೆ ಸಿಕ್ಕಿದೆ. ಈ ಮಸೂದೆಗೆ 2024ರ ಸೆಪ್ಟೆಂಬರ್ 23 ರಂದು ಕರ್ನಾಟಕದ ರಾಜ್ಯಪಾಲರು ಅಧಿಕೃತವಾಗಿ ಅಂಕಿತ ಹಾಕಿದ್ದರು. ಅದರ ಮರುದಿನವೇ, ಅಂದರೆ ಸೆಪ್ಟೆಂಬರ್ 24 ರಂದು ಸರ್ಕಾರದ ವಿಶೇಷ ರಾಜ್ಯಪತ್ರದಲ್ಲಿ (Gazette) ಇದನ್ನು ಪ್ರಕಟಿಸಲಾಗಿತ್ತು. ಇದೀಗ ಸುದೀರ್ಘ ಪ್ರಕ್ರಿಯೆಯ ಬಳಿಕ ಈ ಅಧಿನಿಯಮವನ್ನು ಸಂಪೂರ್ಣವಾಗಿ ಜಾರಿಗೆ ತರಲಾಗುತ್ತಿದೆ.

ಟಿಕೆಟ್ ದರ ಎಷ್ಟು ಹೆಚ್ಚಾಗಲಿದೆ?: ಹೊಸ ನಿಯಮದ ಪ್ರಕಾರ, ಮಲ್ಟಿಪ್ಲೆಕ್ಸ್ ಸೇರಿದಂತೆ ಸಿನಿಮಾ ಮಂದಿರಗಳಲ್ಲಿ ಸಿನಿಮಾ ನೋಡುವ ಗ್ರಾಹಕರು ಟಿಕೆಟ್ ದರದ ಜೊತೆಗೆ 2% ಹೆಚ್ಚುವರಿ ಸೆಸ್ ಪಾವತಿಸಬೇಕಾಗುತ್ತದೆ. ಉದಾಹರಣೆಗೆ, ₹200 ಮುಖಬೆಲೆಯ ಟಿಕೆಟ್‌ಗೆ ಹೆಚ್ಚುವರಿಯಾಗಿ ₹4 ಸೆಸ್ ಪಾವತಿಸಬೇಕಾಗುತ್ತದೆ.

ಸಿನಿಮಾ ಕಾರ್ಮಿಕರ ಕ್ಷೇಮಾಭಿವೃದ್ಧಿಗೆ ನಿಧಿ ಬಳಕೆ: ಸಿನಿಮಾ ಟಿಕೆಟ್ ಮೂಲಕ ಸಂಗ್ರಹವಾಗುವ ಈ ಸೆಸ್ ಹಣವನ್ನು ಕೇವಲ ಸಿನಿಮಾ ರಂಗದ ಕಾರ್ಮಿಕರ ಕಲ್ಯಾಣ ಮತ್ತು ಕ್ಷೇಮಾಭಿವೃದ್ಧಿ ಯೋಜನೆಗಳಿಗಾಗಿ ಮಾತ್ರ ಬಳಸಲಾಗುತ್ತದೆ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ.

ಹೊಟ್ಟೆಯಲ್ಲಿ ಮದ್ಯದ ವಾಸನೆ ಇತ್ತು ಎಂಬ ಕಾರಣಕ್ಕೆ ಮದ್ಯ ಸೇವನೆ ದೃಢಪಡಿಸಲು ಸಾಧ್ಯವಿಲ್ಲ; ಹೈಕೋರ್ಟ್

0

ಬೆಂಗಳೂರು: ಶವಪರೀಕ್ಷೆ ವರದಿಯಲ್ಲಿ ಹೊಟ್ಟೆಯೊಳಗಿನ ಅಂಶಗಳಿಂದ ಮದ್ಯದ ವಾಸನೆ ಬಂದಿತ್ತು ಎಂಬ ಕಾರಣಕ್ಕೆ, ಅಪಘಾತ ಸಂಭವಿಸಿದ ವೇಳೆ ಮೃತ ಕಾರ್ಮಿಕ ಮದ್ಯದ ಅಮಲಿನಲ್ಲಿದ್ದ ಎಂದು ತೀರ್ಮಾನಿಸಲು ಸಾಧ್ಯವಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

ರಸ್ತೆ ಅಪಘಾತದಲ್ಲಿ ಮೃತಪಟ್ಟ ಲಾರಿ ಚಾಲಕನ ಕಾನೂನುಬದ್ಧ ವಾರಸುದಾರರಿಗೆ ಪರಿಹಾರ ನೀಡಲು ನಿರಾಕರಿಸಿದ್ದ ರಸ್ತೆ ಅಪಘಾತಗಳ ಪರಿಹಾರ ನ್ಯಾಯಾಧಿಕರಣದ ಆದೇಶ ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ರವಿ ವಿ. ಹೊಸಮನಿ ಅವರ ಏಕಸದಸ್ಯ ಪೀಠ ಈ ಆದೇಶ ನೀಡಿದೆ.

ಮೃತ ಲಾರಿ ಚಾಲಕನ ಪತ್ನಿ ಹಾಗೂ ಮಕ್ಕಳು ಪರಿಹಾರ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿದ್ದ ಮೋಟಾರು ವಾಹನ ಅಪಘಾತ ನ್ಯಾಯಮಂಡಳಿಯ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದೆ. ಪ್ರಕರಣವನ್ನು ಮತ್ತೆ ನ್ಯಾಯಾಧಿಕರಣಕ್ಕೆ ಹಿಂದಿರುಗಿಸಿರುವ ಪೀಠ, ಹೊಸದಾಗಿ ವಿಚಾರಣೆ ನಡೆಸುವಂತೆ ನಿರ್ದೇಶನ ನೀಡಿದೆ. ಅಲ್ಲದೆ, ಎರಡೂ ಪಕ್ಷಗಾರರು 2026ರ ಅಕ್ಟೋಬರ್ 27ರಂದು ನ್ಯಾಯಮಂಡಳಿ ಮುಂದೆ ಹಾಜರಾಗುವಂತೆ ಸೂಚಿಸಿದೆ.

ಪ್ರತ್ಯಕ್ಷ ಸಾಕ್ಷ್ಯವಿಲ್ಲದೆ ನಿರ್ಧಾರ ಸಾಧ್ಯವಿಲ್ಲ

ಅಪಘಾತದ ವೇಳೆ ಚಾಲಕ ಮದ್ಯದ ಅಮಲಿನಲ್ಲಿದ್ದ ಎಂಬ ನಿರ್ಧಾರವನ್ನು ನ್ಯಾಯಮಂಡಳಿ ಕೇವಲ ಶವಪರೀಕ್ಷೆ ವರದಿಯಲ್ಲಿದ್ದ ಅಂಶಗಳ ಆಧಾರದ ಮೇಲೆ ಕೈಗೊಂಡಿತ್ತು. ಆದರೆ ಅಪಘಾತಕ್ಕೆ ಸಂಬಂಧಿಸಿದ ಯಾವುದೇ ಪ್ರತ್ಯಕ್ಷ ಸಾಕ್ಷಿಯನ್ನೂ ವಿಚಾರಣೆಗೊಳಪಡಿಸಿರಲಿಲ್ಲ.

ಕೇವಲ ಶವಪರೀಕ್ಷೆ ವೇಳೆ ಮದ್ಯದ ವಾಸನೆ ಬಂದಿತ್ತು ಎಂಬ ಅಂಶವನ್ನು ಆಧರಿಸಿ ವ್ಯಕ್ತಿಯೊಬ್ಬರು ಅಪಘಾತದ ಸಮಯದಲ್ಲಿ ಮದ್ಯದ ಅಮಲಿನಲ್ಲಿದ್ದರು ಎಂದು ತೀರ್ಮಾನಿಸಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ.

2007ರಲ್ಲಿ ನಡೆದಿದ್ದ ಅಪಘಾತ

ಆದೇಶದಲ್ಲಿನ ಮಾಹಿತಿಯ ಪ್ರಕಾರ, ಬೆಂಗಳೂರಿನ ಅಜ್ಮೀರ್ ಅಲಿಯಾಸ್ ಅಜಂ ಅವರು ಬೆಂಗಳೂರಿನ ಸಂಜಯಗಾಂಧಿ ಎಂಬುವರ ಬಳಿ ಲಾರಿ ಚಾಲಕರಾಗಿ ಕೆಲಸ ಮಾಡುತ್ತಿದ್ದರು. 2007ರಲ್ಲಿ ಬೆಂಗಳೂರಿನಿಂದ ಹಾಸನಕ್ಕೆ ಲಾರಿ ಚಲಾಯಿಸುತ್ತಿದ್ದ ವೇಳೆ ಕೆಂಚನಹಳ್ಳಿ ಬಳಿ ಅಪಘಾತ ಸಂಭವಿಸಿತ್ತು. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅವರು ಬಳಿಕ ಮೃತಪಟ್ಟಿದ್ದರು.

ಮೃತ ಚಾಲಕನ ಪತ್ನಿ ಹಾಗೂ ಮಕ್ಕಳು 2014ರಲ್ಲಿ ಬೆಂಗಳೂರು ಮೂಲದ ನ್ಯಾಯಮಂಡಳಿಯ ಮುಂದೆ ಉದ್ಯೋಗಿಗಳ ಪರಿಹಾರ ಕಾಯಿದೆಯ ಸೆಕ್ಷನ್ 22ರ ಅಡಿಯಲ್ಲಿ ಪರಿಹಾರ ಕೋರಿ ಅರ್ಜಿ ಸಲ್ಲಿಸಿದ್ದರು.

ಆದರೆ, ಶವಪರೀಕ್ಷೆ ವರದಿಯಲ್ಲಿ ಕರುಳಿನಲ್ಲಿದ್ದ ಅಂಶಗಳಿಂದ ಮದ್ಯದ ವಾಸನೆ ಬರುತ್ತಿತ್ತು ಎಂಬುದನ್ನು ಆಧರಿಸಿ, ಅಪಘಾತದ ವೇಳೆ ಚಾಲಕ ಮದ್ಯದ ಅಮಲಿನಲ್ಲಿದ್ದರು ಎಂದು ನ್ಯಾಯಮಂಡಳಿ ನಿರ್ಧರಿಸಿತ್ತು. ಉದ್ಯೋಗಿಗಳ ಪರಿಹಾರ ಕಾಯಿದೆಯ ಸೆಕ್ಷನ್ 3(1)(ಬಿ)(ಐ) ಅನ್ವಯ ಇಂತಹ ಸಂದರ್ಭದಲ್ಲಿ ಉದ್ಯೋಗದಾತರು ಪರಿಹಾರ ನೀಡುವ ಹೊಣೆಗಾರಿಕೆಯಿಂದ ಮುಕ್ತರಾಗುತ್ತಾರೆ ಎಂದು ಹೇಳಿ ಅರ್ಜಿಯನ್ನು ತಿರಸ್ಕರಿಸಿತ್ತು. ಈ ಆದೇಶ ಪ್ರಶ್ನಿಸಿ ಮೃತರ ಕುಟುಂಬಸ್ಥರು ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು.

ಮೃತ ಚಾಲಕನ ಪರ ವಕೀಲರ ವಾದವೇನು?

ವಿಚಾರಣೆ ವೇಳೆ ಮೃತ ಚಾಲಕನ ಪರ ವಕೀಲರು, ಕೇವಲ ಮದ್ಯದ ವಾಸನೆ ಇತ್ತು ಎಂಬ ಅಂಶದಿಂದ ಚಾಲಕ ವಾಹನ ಚಲಾಯಿಸುವಾಗ ಮದ್ಯದ ಅಮಲಿನಲ್ಲಿದ್ದರು ಅಥವಾ ಅಪಘಾತವು ಅವರ ನಿರ್ಲಕ್ಷ್ಯದಿಂದ ಸಂಭವಿಸಿತು ಎಂದು ನಿರ್ಧರಿಸಲು ಸಾಧ್ಯವಿಲ್ಲ ಎಂದು ವಾದಿಸಿದರು.

ವೈದ್ಯರು ಶವಪರೀಕ್ಷೆ ವರದಿಯಲ್ಲಿ ಕರುಳಿನಲ್ಲಿದ್ದ ಅಂಶಗಳಿಂದ ಮದ್ಯದ ವಾಸನೆ ಬರುತ್ತಿತ್ತು ಎಂದು ಮಾತ್ರ ಉಲ್ಲೇಖಿಸಿದ್ದಾರೆ. ಆದರೆ ಅಪಘಾತ ಸಂಭವಿಸಿದ ಸಮಯದಲ್ಲಿ ಚಾಲಕ ಮದ್ಯದ ಪ್ರಭಾವದಲ್ಲಿದ್ದರು ಎಂಬುದನ್ನು ಸಾಬೀತುಪಡಿಸುವ ಯಾವುದೇ ಪೂರಕ ದಾಖಲೆ ಅಥವಾ ಸಾಕ್ಷ್ಯವನ್ನು ನೀಡಲಾಗಿಲ್ಲ ಎಂದು ವಕೀಲರು ಪೀಠದ ಗಮನಕ್ಕೆ ತಂದರು.

ವಿಮಾ ಸಂಸ್ಥೆಯ ವಾದ

ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ವಿಮಾ ಸಂಸ್ಥೆಯ ಪರ ವಕೀಲರು, ಶವಪರೀಕ್ಷೆ ವರದಿಯಲ್ಲಿ ಮದ್ಯದ ಅಂಶ ಕಂಡುಬಂದಿರುವುದರಿಂದ ನ್ಯಾಯಮಂಡಳಿ ನೀಡಿರುವ ತೀರ್ಪು ಸರಿಯಾಗಿದೆ ಎಂದು ವಾದಿಸಿದರು. ಹೀಗಾಗಿ ಹೈಕೋರ್ಟ್‌ನಲ್ಲಿ ಸಲ್ಲಿಸಿರುವ ಅರ್ಜಿಯನ್ನು ವಜಾಗೊಳಿಸುವಂತೆ ಮನವಿ ಮಾಡಿದರು.

ಎರಡೂ ಪಕ್ಷಗಳ ವಾದ ಆಲಿಸಿದ ಬಳಿಕ ಹೈಕೋರ್ಟ್, ಕೇವಲ ಶವಪರೀಕ್ಷೆ ವರದಿಯಲ್ಲಿ ಮದ್ಯದ ವಾಸನೆ ಉಲ್ಲೇಖವಾಗಿದೆ ಎಂಬ ಕಾರಣಕ್ಕೆ ಅಪಘಾತದ ವೇಳೆ ಚಾಲಕ ಮದ್ಯದ ಅಮಲಿನಲ್ಲಿದ್ದರು ಎಂದು ನಿರ್ಧರಿಸಲಾಗದು ಎಂದು ಅಭಿಪ್ರಾಯಪಟ್ಟಿದೆ. ಈ ಹಿನ್ನೆಲೆಯಲ್ಲಿ ಪರಿಹಾರ ಅರ್ಜಿಯನ್ನು ತಿರಸ್ಕರಿಸಿದ್ದ ನ್ಯಾಯಮಂಡಳಿ ಆದೇಶವನ್ನು ರದ್ದುಪಡಿಸಿ, ಪ್ರಕರಣವನ್ನು ಮರು ವಿಚಾರಣೆಗೆ ಕಳುಹಿಸಿದೆ.

ಕ್ವಾರಿ-ಕ್ರಷರ್ ಮಾಲೀಕರ ಅನಿರ್ದಿಷ್ಟಾವಧಿ ಮುಷ್ಕರ; ರಾಜ್ಯಾದ್ಯಂತ ಜಲ್ಲಿ, ಎಂ-ಸ್ಯಾಂಡ್ ಪೂರೈಕೆ ಬಂದ್

0

ಚಿಕ್ಕಬಳ್ಳಾಪುರ: ರಾಜ್ಯ ಸರ್ಕಾರದ ತೆರಿಗೆ ನೀತಿಯನ್ನು ವಿರೋಧಿಸಿ ಕ್ವಾರಿ ಮತ್ತು ಸ್ಟೋನ್ ಕ್ರಷರ್ ಮಾಲೀಕರು ಇಂದಿನಿಂದ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿದ್ದಾರೆ.

ಇದರ ಪರಿಣಾಮ ಚಿಕ್ಕಬಳ್ಳಾಪುರ ಸೇರಿದಂತೆ ರಾಜ್ಯಾದ್ಯಂತ ಜಲ್ಲಿ ಹಾಗೂ ಎಂ-ಸ್ಯಾಂಡ್ ಉತ್ಪಾದನೆ ಮತ್ತು ಪೂರೈಕೆ ಸ್ಥಗಿತಗೊಂಡಿದೆ.

ಮುಷ್ಕರದ ಹಿನ್ನೆಲೆಯಲ್ಲಿ ರಸ್ತೆ, ಮನೆ, ವಾಣಿಜ್ಯ ಕಟ್ಟಡ ಸೇರಿದಂತೆ ವಿವಿಧ ನಿರ್ಮಾಣ ಕಾಮಗಾರಿಗಳಿಗೆ ಜಲ್ಲಿ ಮತ್ತು ಎಂ-ಸ್ಯಾಂಡ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ.

ಮುಷ್ಕರಕ್ಕೆ ಕಾರಣವೇನು?

ಒಂದೇ ಕಲ್ಲು ಉತ್ಪನ್ನಕ್ಕೆ ಎರಡು ಬಾರಿ ರಾಯಧನ ವಸೂಲಿ ಮಾಡುತ್ತಿರುವುದನ್ನು ಕ್ವಾರಿ ಹಾಗೂ ಕ್ರಷರ್ ಮಾಲೀಕರು ವಿರೋಧಿಸಿದ್ದಾರೆ. ಲೋಕೋಪಯೋಗಿ ಇಲಾಖೆ, ಜಲಸಂಪನ್ಮೂಲ ಇಲಾಖೆ ಸೇರಿದಂತೆ ವಿವಿಧ ಸರ್ಕಾರಿ ಗುತ್ತಿಗೆ ಕಾಮಗಾರಿಗಳಲ್ಲಿ ಗಣಿ ಉತ್ಪನ್ನಗಳಿಗೆ ನೇರವಾಗಿ ರಾಯಧನ ಕಡಿತ ಮಾಡಲಾಗುತ್ತಿದೆ. ಇದರ ಜೊತೆಗೆ ಕ್ವಾರಿ ಮತ್ತು ಕ್ರಷರ್ ಮಾಲೀಕರಿಂದಲೂ ಪ್ರತ್ಯೇಕವಾಗಿ ರಾಯಧನ ಸಂಗ್ರಹಿಸಲಾಗುತ್ತಿದೆ ಎಂದು ಸಂಘದ ಮುಖಂಡರು ಆರೋಪಿಸಿದ್ದಾರೆ.

ಒಂದೇ ಕಚ್ಚಾ ಉತ್ಪನ್ನಕ್ಕೆ ಎರಡು ಬಾರಿ ರಾಯಧನ ವಿಧಿಸುವುದನ್ನು ಪ್ರಶ್ನಿಸಿರುವ ಮಾಲೀಕರು, ಈ ಕೂಡಲೇ ಏಕೀಕೃತ ರಾಯಧನ ನೀತಿ ಜಾರಿಗೊಳಿಸಿ ಒಂದೇ ಹಂತದಲ್ಲಿ ರಾಯಧನ ಸಂಗ್ರಹಿಸಬೇಕು ಎಂದು ಒತ್ತಾಯಿಸಿದ್ದಾರೆ.

ಜಲ್ಲಿ, ಎಂ-ಸ್ಯಾಂಡ್ ಉತ್ಪಾದನೆ ಬಂದ್:

ಚಿಕ್ಕಬಳ್ಳಾಪುರ ಜಿಲ್ಲೆಯ ನೂರಾರು ಕ್ವಾರಿ ಮತ್ತು ಕ್ರಷರ್ ಘಟಕಗಳು ಮುಷ್ಕರದ ಹಿನ್ನೆಲೆಯಲ್ಲಿ ಕಾರ್ಯಾಚರಣೆ ಸ್ಥಗಿತಗೊಳಿಸಿವೆ. ಜಲ್ಲಿಕಲ್ಲು, ಕಾಂಕ್ರೀಟ್ ಪುಡಿ ಹಾಗೂ ಎಂ-ಸ್ಯಾಂಡ್ ಉತ್ಪಾದನೆ, ಲೋಡಿಂಗ್ ಮತ್ತು ಸಾಗಣೆ ಕೂಡ ಬಂದ್ ಆಗಿದೆ.

ಮುಷ್ಕರ ಮುಂದುವರಿದರೆ ಖಾಸಗಿ ಮನೆಗಳು, ಅಪಾರ್ಟ್‌ಮೆಂಟ್‌ಗಳು, ರಸ್ತೆ, ಸೇತುವೆ ಹಾಗೂ ವಿವಿಧ ಮೂಲಸೌಕರ್ಯ ಕಾಮಗಾರಿಗಳ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದೆ. ಸರ್ಕಾರ ತಕ್ಷಣ ಸಂಘದ ಮುಖಂಡರೊಂದಿಗೆ ಮಾತುಕತೆ ನಡೆಸಿ ಸಮಸ್ಯೆ ಬಗೆಹರಿಸಬೇಕು ಎಂದು ಕ್ವಾರಿ-ಕ್ರಷರ್ ಮಾಲೀಕರು ಹಾಗೂ ವಿತರಕರು ಒತ್ತಾಯಿಸಿದ್ದಾರೆ.

ಸಮಸ್ಯೆ ಬಗೆಹರಿಯುವವರೆಗೂ ಮುಷ್ಕರದಿಂದ ಹಿಂದೆ ಸರಿಯುವುದಿಲ್ಲ ಎಂದು ಸಂಘದ ಮುಖಂಡರು ತಿಳಿಸಿದ್ದಾರೆ.

₹25 ಕೋಟಿ ಬಜೆಟ್, ₹300 ಕೋಟಿ ಕಲೆಕ್ಷನ್! ನಿವಿನ್ ಪೌಲಿ–ಮಮಿತಾ ಬೈಜು ‘ಬೆತ್ಲೆಹೆಂ ಫ್ಯಾಮಿಲಿ ಯೂನಿಟ್’ OTTಗೆ ಎಂಟ್ರಿ

0

‘ಪ್ರೇಮಲು’ ಸಿನಿಮಾದ ಮೂಲಕ ಪ್ರೇಕ್ಷಕರ ಗಮನ ಸೆಳೆದ ನಿರ್ದೇಶಕ ಗಿರೀಶ್ ಎ.ಡಿ. ಇದೀಗ ಮತ್ತೊಂದು ನ್ಯೂ ಏಜ್ ಲವ್ ಸ್ಟೋರಿಯೊಂದಿಗೆ ಸದ್ದು ಮಾಡುತ್ತಿದ್ದಾರೆ. ಮಲಯಾಳಂ ಸ್ಟಾರ್ ನಟ ನಿವಿನ್ ಪೌಲಿ ಹಾಗೂ ಟ್ರೆಂಡಿಂಗ್ ನಟಿ ಮಮಿತಾ ಬೈಜು ಪ್ರಮುಖ ಪಾತ್ರಗಳಲ್ಲಿ ನಟಿಸಿರುವ ‘ಬೆತ್ಲೆಹೆಂ ಫ್ಯಾಮಿಲಿ ಯೂನಿಟ್’ ಸಿನಿಮಾ ಸದ್ಯ ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಸದ್ದು ಮಾಡುತ್ತಿದ್ದು, ಇದೀಗ ಓಟಿಟಿ ಬಿಡುಗಡೆಯ ಬಗ್ಗೆಯೂ ಚರ್ಚೆ ಶುರುವಾಗಿದೆ.

ಇತ್ತೀಚಿನ ದಿನಗಳಲ್ಲಿ ದೊಡ್ಡ ಮಟ್ಟದ ಪ್ರಚಾರ, ಭರ್ಜರಿ ಆ್ಯಕ್ಷನ್ ಸೀಕ್ವೆನ್ಸ್‌ಗಳು, ಸ್ಪೆಷಲ್ ಸಾಂಗ್ಸ್ ಅಥವಾ ಭಾರೀ VFX ಇಲ್ಲದಿದ್ದರೂ ಕೇವಲ ಕಂಟೆಂಟ್‌ನ ಬಲದಿಂದ ಪ್ರೇಕ್ಷಕರನ್ನು ಸೆಳೆಯುತ್ತಿರುವ ಸಿನಿಮಾಗಳು ಬಾಕ್ಸ್ ಆಫೀಸ್‌ನಲ್ಲಿ ಗಮನ ಸೆಳೆಯುತ್ತಿವೆ. ಈ ಸಾಲಿಗೆ ‘ಬೆತ್ಲೆಹೆಂ ಫ್ಯಾಮಿಲಿ ಯೂನಿಟ್’ ಕೂಡ ಸೇರಿದೆ ಎನ್ನಲಾಗುತ್ತಿದೆ.

ಮಲಯಾಳಂನಲ್ಲಿ ಬಿಡುಗಡೆಯಾದ ಬಳಿಕ ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ ಸಿಕ್ಕಿದ್ದು, ಬಾಕ್ಸ್ ಆಫೀಸ್‌ನಲ್ಲೂ ಭರ್ಜರಿ ಕಲೆಕ್ಷನ್ ಮಾಡುತ್ತಿದೆ ಎನ್ನಲಾಗಿದೆ. ಸುಮಾರು 25 ಕೋಟಿ ರೂಪಾಯಿ ಬಜೆಟ್‌ನಲ್ಲಿ ನಿರ್ಮಾಣವಾಗಿರುವ ಸಿನಿಮಾ 300 ಕೋಟಿಗೂ ಅಧಿಕ ಕಲೆಕ್ಷನ್ ಮಾಡಿದೆ ಎಂಬ ವರದಿಗಳು ಹರಿದಾಡುತ್ತಿವೆ. ಇದರೊಂದಿಗೆ ಸಿನಿಮಾ ನಿರ್ಮಾಪಕರಿಗೆ ದೊಡ್ಡ ಮಟ್ಟದ ಲಾಭ ತಂದುಕೊಟ್ಟಿದೆ ಎನ್ನಲಾಗುತ್ತಿದೆ.

ಥಿಯೇಟರ್‌ಗಳಲ್ಲಿ ಬಿಡುಗಡೆಯಾಗಿ ಸುಮಾರು ಒಂದು ತಿಂಗಳು ಸಮೀಪಿಸುತ್ತಿದ್ದರೂ ಚಿತ್ರದ ಕಲೆಕ್ಷನ್ ಓಟ ಮುಂದುವರಿದಿದೆ ಎನ್ನಲಾಗಿದೆ. ಇತ್ತೀಚೆಗೆ ತೆಲುಗು ರಾಜ್ಯಗಳಲ್ಲೂ ಸಿನಿಮಾದ ತೆಲುಗು ವರ್ಷನ್ ಬಿಡುಗಡೆಯಾಗಿದ್ದು, ಅಲ್ಲಿಯೂ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ ಎಂಬ ಮಾಹಿತಿ ಇದೆ.

ಇದೀಗ ಸಿನಿಮಾ ಓಟಿಟಿಗೆ ಯಾವಾಗ ಬರಲಿದೆ ಎಂಬ ಕುತೂಹಲ ಅಭಿಮಾನಿಗಳಲ್ಲಿ ಮೂಡಿದೆ. ‘ಬೆತ್ಲೆಹೆಂ ಫ್ಯಾಮಿಲಿ ಯೂನಿಟ್’ ಚಿತ್ರದ ಡಿಜಿಟಲ್ ಸ್ಟ್ರೀಮಿಂಗ್ ಹಕ್ಕುಗಳನ್ನು ಜಿಯೋಹಾಟ್‌ಸ್ಟಾರ್ ಪಡೆದುಕೊಂಡಿದೆ ಎನ್ನಲಾಗಿದೆ. ಥಿಯೇಟ್ರಿಕಲ್ ಬಿಡುಗಡೆಯಾದ ಸುಮಾರು 4ರಿಂದ 6 ವಾರಗಳ ಬಳಿಕ ಚಿತ್ರವನ್ನು ಓಟಿಟಿಯಲ್ಲಿ ಸ್ಟ್ರೀಮಿಂಗ್ ಮಾಡುವ ಕುರಿತು ಒಪ್ಪಂದವಾಗಿದೆ ಎಂಬ ವರದಿಗಳಿವೆ.

ಈ ಲೆಕ್ಕಾಚಾರದ ಪ್ರಕಾರ, ಸೆಪ್ಟೆಂಬರ್ ಕೊನೆಯ ವಾರ ಅಥವಾ ಅಕ್ಟೋಬರ್ ಮೊದಲ ವಾರದಲ್ಲಿ ‘ಬೆತ್ಲೆಹೆಂ ಫ್ಯಾಮಿಲಿ ಯೂನಿಟ್’ ಓಟಿಟಿಗೆ ಎಂಟ್ರಿ ನೀಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಮಲಯಾಳಂ ಜೊತೆಗೆ ತೆಲುಗು ವರ್ಷನ್ ಕೂಡ ಇದೇ ಅವಧಿಯಲ್ಲಿ ಸ್ಟ್ರೀಮಿಂಗ್ ಆಗುವ ಸಾಧ್ಯತೆಯಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಆದರೆ ಈ ಬಗ್ಗೆ ಚಿತ್ರತಂಡ ಅಥವಾ ಓಟಿಟಿ ಸಂಸ್ಥೆಯಿಂದ ಅಧಿಕೃತ ಘೋಷಣೆ ಇನ್ನಷ್ಟೇ ಹೊರಬರಬೇಕಿದೆ.

ಸಿನಿಮಾದಲ್ಲಿ ನಿವಿನ್ ಪೌಲಿ ಮತ್ತು ಮಮಿತಾ ಬೈಜು ಜೊತೆಗೆ ಸಂಗೀತ್ ಪ್ರತಾಪ್, ಸುರೇಶ್ ಕೃಷ್ಣ, ವಿನಯ್ ಫೋರ್ಟ್, ರೋಷನ್ ಶಾನವಾಸ್ ಸೇರಿದಂತೆ ಹಲವರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ದಿಲೀಶ್ ಪೋಥನ್, ಫಹಾದ್ ಫಾಸಿಲ್ ಹಾಗೂ ಶ್ಯಾಮ್ ಪುಷ್ಕರನ್ ಸೇರಿದಂತೆ ಹಲವರು ಜಂಟಿಯಾಗಿ ಚಿತ್ರವನ್ನು ನಿರ್ಮಿಸಿದ್ದಾರೆ.

ವಿಶೇಷವೆಂದರೆ, ತೆಲುಗು ರಾಜ್ಯಗಳಲ್ಲಿ ‘ಬೆತ್ಲೆಹೆಂ ಫ್ಯಾಮಿಲಿ ಯೂನಿಟ್’ ಸಿನಿಮಾವನ್ನು ಮೈತ್ರಿ ಮೂವಿ ಮೇಕರ್ಸ್ ಬಿಡುಗಡೆ ಮಾಡಿದೆ. ಥಿಯೇಟರ್‌ಗಳಲ್ಲಿ ಪ್ರೇಕ್ಷಕರನ್ನು ರಂಜಿಸಿರುವ ಈ ಸಿನಿಮಾ ಇದೀಗ ಓಟಿಟಿಯಲ್ಲಿ ಯಾವ ದಿನಾಂಕಕ್ಕೆ ಸ್ಟ್ರೀಮಿಂಗ್ ಆಗಲಿದೆ ಎಂಬುದರ ಅಧಿಕೃತ ಮಾಹಿತಿ ಹೊರಬೀಳಬೇಕಿದೆ.

ಹೆಚ್ಚುವರಿ ಶುಲ್ಕ ವಸೂಲಿ ಆರೋಪ; ಖಾಸಗಿ ಬಸ್‌ಗಳ ವಿರುದ್ಧ 3,756 ಕೇಸ್ ದಾಖಲು!

0

ಬೆಂಗಳೂರು: ಗಣೇಶ ಚತುರ್ಥಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರಿಂದ ಹೆಚ್ಚುವರಿ ದರ ವಸೂಲಿ ಸೇರಿದಂತೆ ವಿವಿಧ ನಿಯಮ ಉಲ್ಲಂಘನೆ ಮಾಡಿದ ಖಾಸಗಿ ಬಸ್‌ಗಳ ವಿರುದ್ಧ ಆರ್‌ಟಿಒ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದಾರೆ.

ಸೆಪ್ಟೆಂಬರ್ 11ರಿಂದ 15ರವರೆಗೆ ನಡೆದ ತಪಾಸಣೆಯಲ್ಲಿ 3,756 ಪ್ರಕರಣಗಳನ್ನು ದಾಖಲಿಸಲಾಗಿದೆ.

ಅಂತರರಾಜ್ಯ ಸೇವೆ ಸೇರಿದಂತೆ ಒಟ್ಟು 14,987 ಖಾಸಗಿ ಬಸ್‌ಗಳನ್ನು ಅಧಿಕಾರಿಗಳು ಪರಿಶೀಲಿಸಿದ್ದಾರೆ. ಈ ವೇಳೆ ಪರವಾನಗಿ ನಿಯಮ ಉಲ್ಲಂಘನೆ, ಪ್ರಯಾಣಿಕರಿಂದ ಹೆಚ್ಚುವರಿ ಶುಲ್ಕ ವಸೂಲಿ, ತೆರಿಗೆ ವಂಚನೆ ಸೇರಿದಂತೆ ಹಲವು ಅಕ್ರಮಗಳು ಪತ್ತೆಯಾಗಿವೆ.

ನಿಯಮ ಉಲ್ಲಂಘನೆಗೆ ಸಂಬಂಧಿಸಿದಂತೆ 33 ವಾಹನಗಳನ್ನು ಜಪ್ತಿ ಮಾಡಲಾಗಿದ್ದು, ಕಾರ್ಯಾಚರಣೆಯಲ್ಲಿ ಒಟ್ಟು ₹73.6 ಲಕ್ಷ ಸಂಗ್ರಹಿಸಲಾಗಿದೆ. ಇದರಲ್ಲಿ ₹40.3 ಲಕ್ಷ ದಂಡದ ಮೊತ್ತವಾಗಿದೆ.

ಇನ್ನು ಸಾರ್ವಜನಿಕರಿಂದ ಬಂದ ದೂರುಗಳನ್ನು ಹೆಚ್ಚಿನ ಕ್ರಮಕ್ಕಾಗಿ ಸಂಬಂಧಪಟ್ಟ ನೋಂದಣಿ ಪ್ರಾಧಿಕಾರಗಳಿಗೆ ಕಳುಹಿಸಲಾಗಿದೆ ಎಂದು ತಿಳಿಸಲಾಗಿದೆ.

ಅಗರ್ಕರ್ ಜಾಗಕ್ಕೆ ಮಾಜಿ ಕ್ರಿಕೆಟಿಗರ ಎಂಟ್ರಿ: RCB ಮಾಜಿ ಆಟಗಾರ ಪಾರ್ಥಿವ್ ಪಟೇಲ್ ಸೇರಿ ಇಬ್ಬರು ರೇಸ್ʼನಲ್ಲಿ!

0

ಬಿಸಿಸಿಐ ಚೀಫ್ ಸೆಲೆಕ್ಟರ್ ಅಜಿತ್ ಅಗರ್ಕರ್ ಅವರ ಒಪ್ಪಂದ ಮುಂದುವರಿಯಲಿದೆಯೇ ಅಥವಾ ಹೊಸ ಆಯ್ಕೆ ಸಮಿತಿ ಮುಖ್ಯಸ್ಥರನ್ನು ನೇಮಕ ಮಾಡಲಾಗುತ್ತದೆಯೇ ಎಂಬ ಚರ್ಚೆ ಇದೀಗ ತೀವ್ರಗೊಂಡಿದೆ. ಕೆಲವು ಮಾಧ್ಯಮಗಳ ವರದಿಗಳ ಪ್ರಕಾರ, ಅಜಿತ್ ಅಗರ್ಕರ್ ಅವರೊಂದಿಗೆ ಒಪ್ಪಂದವನ್ನು ಮುಂದುವರಿಸದಿರಲು ಬಿಸಿಸಿಐ ನಿರ್ಧರಿಸಿದ್ದು, ನೂತನ ಚೀಫ್ ಸೆಲೆಕ್ಟರ್ ಆಯ್ಕೆ ಪ್ರಕ್ರಿಯೆ ಆರಂಭಿಸಿದೆ ಎನ್ನಲಾಗಿದೆ.

2023ರ ಜುಲೈನಲ್ಲಿ ಟೀಂ ಇಂಡಿಯಾ ಆಯ್ಕೆ ಸಮಿತಿ ಮುಖ್ಯಸ್ಥರಾಗಿ ನೇಮಕಗೊಂಡಿದ್ದ ಅಜಿತ್ ಅಗರ್ಕರ್ ಅವರ ಪ್ರಸ್ತುತ ಒಪ್ಪಂದ ಅಕ್ಟೋಬರ್ 4ರಂದು ಮುಕ್ತಾಯಗೊಳ್ಳಲಿದೆ ಎನ್ನಲಾಗಿದೆ. ಅಗರ್ಕರ್ ಅವರು 2027ರ ಐಸಿಸಿ ಏಕದಿನ ವಿಶ್ವಕಪ್‌ವರೆಗೂ ಚೀಫ್ ಸೆಲೆಕ್ಟರ್ ಆಗಿ ಮುಂದುವರಿಯಲು ಆಸಕ್ತಿ ಹೊಂದಿದ್ದರು ಎಂಬ ವರದಿಗಳೂ ಇವೆ.

ರೋಹಿತ್ ಶರ್ಮಾ ವಿಚಾರದಲ್ಲಿ ಬಿಸಿಸಿಐ ಅಸಮಾಧಾನ?

ಅಜಿತ್ ಅಗರ್ಕರ್ ಹಾಗೂ ಬಿಸಿಸಿಐ ನಡುವಿನ ಭಿನ್ನಾಭಿಪ್ರಾಯಗಳಿಗೆ ಹಲವು ಕಾರಣಗಳನ್ನು ಮಾಧ್ಯಮ ವರದಿಗಳು ಉಲ್ಲೇಖಿಸಿವೆ. ಅದರಲ್ಲೂ ಮಾಜಿ ನಾಯಕ ರೋಹಿತ್ ಶರ್ಮಾ ಅವರ ಭವಿಷ್ಯದ ಕುರಿತಂತೆ ಅಗರ್ಕರ್ ತೆಗೆದುಕೊಳ್ಳಲು ಮುಂದಾಗಿದ್ದ ನಿರ್ಧಾರ ಬಿಸಿಸಿಐ ವಲಯದಲ್ಲಿ ಅಸಮಾಧಾನಕ್ಕೆ ಕಾರಣವಾಗಿತ್ತು ಎನ್ನಲಾಗಿದೆ.

ವಿವಿಧ ವರದಿಗಳ ಪ್ರಕಾರ, ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಗೂ ಮುನ್ನ ರೋಹಿತ್ ಶರ್ಮಾ ಅವರನ್ನು 2027ರ ಏಕದಿನ ವಿಶ್ವಕಪ್ ಯೋಜನೆಯ ಭಾಗವಾಗಿ ಪರಿಗಣಿಸುತ್ತಿಲ್ಲ ಎಂದು ಅಗರ್ಕರ್ ತಿಳಿಸಿದ್ದರು ಎನ್ನಲಾಗಿದೆ. ಮುಂದಿನ ವಿಶ್ವಕಪ್‌ಗಾಗಿ ಯುವ ಆಟಗಾರರನ್ನು ಬೆಳೆಸುವ ಉದ್ದೇಶವಿದೆ ಎಂಬ ಸಂದೇಶವನ್ನು ನೀಡಲಾಗಿತ್ತು ಎನ್ನಲಾಗಿದೆ.

ಆದರೆ ಲಾರ್ಡ್ಸ್‌ನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ರೋಹಿತ್ ಶರ್ಮಾ ಶತಕ ಸಿಡಿಸಿ ಗಮನ ಸೆಳೆದಿದ್ದರು. ಇದೇ ವೇಳೆ ಬಿಸಿಸಿಐ ಕಾರ್ಯದರ್ಶಿ ಬಹಿರಂಗವಾಗಿ ರೋಹಿತ್ ಶರ್ಮಾ ಅವರಿಗೆ ಬೆಂಬಲ ಸೂಚಿಸಿದ್ದರು ಎನ್ನಲಾಗಿದೆ. ಈ ಬೆಳವಣಿಗೆಗಳು ಅಗರ್ಕರ್ ಹಾಗೂ ಬಿಸಿಸಿಐ ನಡುವಿನ ಸಂಬಂಧದ ಕುರಿತು ಚರ್ಚೆಗೆ ಕಾರಣವಾಗಿವೆ.

ಅಗರ್ಕರ್ ಬಳಿಕ ಯಾರು?

ಒಂದು ವೇಳೆ ಅಜಿತ್ ಅಗರ್ಕರ್ ಚೀಫ್ ಸೆಲೆಕ್ಟರ್ ಹುದ್ದೆಯಿಂದ ಕೆಳಗಿಳಿದರೆ, ಎನ್‌ಸಿಎ ಮುಖ್ಯಸ್ಥ ವಿವಿಎಸ್ ಲಕ್ಷ್ಮಣ್ ಅವರನ್ನು ಆ ಸ್ಥಾನಕ್ಕೆ ನೇಮಕ ಮಾಡುವ ಸಾಧ್ಯತೆಯಿದೆ ಎಂಬ ಮಾತುಗಳು ಈ ಹಿಂದೆ ಕೇಳಿಬಂದಿದ್ದವು.

ಆದರೆ ಇದೀಗ ಹೊಸ ಬೆಳವಣಿಗೆಯೊಂದರಲ್ಲಿ ಟೀಂ ಇಂಡಿಯಾ ಹಾಗೂ ಆರ್‌ಸಿಬಿಯ ಮಾಜಿ ಕ್ರಿಕೆಟಿಗ ಪಾರ್ಥಿವ್ ಪಟೇಲ್ ಮತ್ತು ಭಾರತದ ಮಾಜಿ ಸ್ಪಿನ್ನರ್ ಪ್ರಗ್ಯಾನ್ ಓಜಾ ಅವರ ಹೆಸರುಗಳು ಚೀಫ್ ಸೆಲೆಕ್ಟರ್ ಹುದ್ದೆಗೆ ಮುಂಚೂಣಿಗೆ ಬಂದಿವೆ ಎನ್ನಲಾಗಿದೆ. ಈ ಇಬ್ಬರ ಹೆಸರುಗಳನ್ನು ಬಿಸಿಸಿಐ ಶಾರ್ಟ್‌ಲಿಸ್ಟ್ ಮಾಡಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಅಜಿತ್ ಅಗರ್ಕರ್ 2023ರಲ್ಲಿ ಚೀಫ್ ಸೆಲೆಕ್ಟರ್ ಆಗಿ ಅಧಿಕಾರ ವಹಿಸಿಕೊಂಡ ಬಳಿಕ ಭಾರತ ತಂಡ ಹಲವು ಪ್ರಮುಖ ಐಸಿಸಿ ಟೂರ್ನಿಗಳಲ್ಲಿ ಯಶಸ್ಸು ಸಾಧಿಸಿದೆ. 2024ರಲ್ಲಿ ಟಿ20 ವಿಶ್ವಕಪ್ ಗೆದ್ದ ಭಾರತ, ಬಳಿಕ 2025ರ ಚಾಂಪಿಯನ್ಸ್ ಟ್ರೋಫಿಯನ್ನೂ ತನ್ನದಾಗಿಸಿಕೊಂಡಿತು. 2026ರ ಟಿ20 ವಿಶ್ವಕಪ್‌ನಲ್ಲಿಯೂ ಭಾರತ ಪ್ರಶಸ್ತಿ ಗೆದ್ದಿದೆ ಎನ್ನಲಾಗಿದೆ.

ಹೀಗಾಗಿ ಅಜಿತ್ ಅಗರ್ಕರ್ ಅವರ ಮುಂದಿನ ನಡೆ ಹಾಗೂ ಬಿಸಿಸಿಐನ ಹೊಸ ಚೀಫ್ ಸೆಲೆಕ್ಟರ್ ಆಯ್ಕೆ ಪ್ರಕ್ರಿಯೆ ಇದೀಗ ಕ್ರಿಕೆಟ್ ವಲಯದಲ್ಲಿ ಕುತೂಹಲ ಮೂಡಿಸಿದೆ. ಪಾರ್ಥಿವ್ ಪಟೇಲ್ ಅಥವಾ ಪ್ರಗ್ಯಾನ್ ಓಜಾ ಅವರಲ್ಲಿ ಯಾರಿಗೆ ಅವಕಾಶ ಸಿಗಲಿದೆ ಎಂಬುದು ಮುಂದಿನ ದಿನಗಳಲ್ಲಿ ಸ್ಪಷ್ಟವಾಗಬೇಕಿದೆ.

ಕಲ್ಲು ಕ್ವಾರಿ ನಿಯಮ ಉಲ್ಲಂಘನೆ ಆರೋಪ; ಸಚಿವ ರುದ್ರಪ್ಪ ಲಮಾಣಿಗೆ ₹3 ಕೋಟಿ ದಂಡ!

0

ಹಾವೇರಿ: ಕಲ್ಲು ಕ್ವಾರಿ ಪರವಾನಗಿ ನಿಯಮಗಳನ್ನು ಉಲ್ಲಂಘಿಸಿದ ಆರೋಪದ ಹಿನ್ನೆಲೆಯಲ್ಲಿ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಕಲ್ಲು ಕ್ವಾರಿ ಮಾಲೀಕರಾದ ರುದ್ರಪ್ಪ ಲಮಾಣಿ ಅವರಿಗೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ₹3 ಕೋಟಿ ದಂಡ ವಿಧಿಸಿದೆ.

ರಾಣೆಬೆನ್ನೂರು ತಾಲೂಕಿನ ಹುಣಸಿಕಟ್ಟಿ ಬಳಿಯಿರುವ ಕಲ್ಲು ಕ್ವಾರಿಗೆ ಸಂಬಂಧಿಸಿದಂತೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ವರದಿಯಾಗಿದೆ.

ಕ್ವಾರಿಗೆ ನಿಗದಿಪಡಿಸಿದ ವ್ಯಾಪ್ತಿಯನ್ನು ಮೀರಿ ಹೆಚ್ಚುವರಿಯಾಗಿ ಕಲ್ಲು ತೆಗೆದಿರುವುದು ಹಾಗೂ ಕ್ವಾರಿ ಸುತ್ತಮುತ್ತಲಿನ ಪ್ರದೇಶವನ್ನು ಒತ್ತುವರಿ ಮಾಡಿಕೊಂಡು ಗಣಿಗಾರಿಕೆ ನಡೆಸಿರುವುದು ನಿಯಮ ಉಲ್ಲಂಘನೆ ಎಂದು ಇಲಾಖೆಯ ನೋಟಿಸ್‌ನಲ್ಲಿ ಉಲ್ಲೇಖಿಸಲಾಗಿದೆ.

ಕ್ವಾರಿ ಪ್ರದೇಶದಲ್ಲಿ ನಿಯಮ ಉಲ್ಲಂಘನೆಯಾಗಿದೆಯೇ ಎಂಬುದನ್ನು ಪರಿಶೀಲಿಸಲು ಡ್ರೋನ್ ಮೂಲಕ ಸಮೀಕ್ಷೆ ನಡೆಸಲಾಗಿದ್ದು, ಕರ್ನಾಟಕ ರಿಮೋಟ್ ಸೆನ್ಸಿಂಗ್ ಅಪ್ಲಿಕೇಶನ್ಸ್ ಸೆಂಟರ್‌ (KRSAC) ಮೂಲಕ ನಡೆಸಲಾದ ಸಮೀಕ್ಷೆಯ ಆಧಾರದ ಮೇಲೆ ಅಕ್ರಮಗಳನ್ನು ಗುರುತಿಸಲಾಗಿದೆ ಎಂದು ತಿಳಿದುಬಂದಿದೆ.

ಹಾವೇರಿ ಜಿಲ್ಲೆಯಲ್ಲಿ 60ಕ್ಕೂ ಹೆಚ್ಚು ಕಲ್ಲು ಕ್ವಾರಿ ಮಾಲೀಕರಿಗೆ ದಂಡ ವಿಧಿಸಲಾಗಿದ್ದು, ಈ ಪಟ್ಟಿಯಲ್ಲಿ ರುದ್ರಪ್ಪ ಲಮಾಣಿ ಅವರ ಕ್ವಾರಿಯೂ ಸೇರಿದೆ ಎನ್ನಲಾಗಿದೆ.

ದಂಡದ ಮೊತ್ತವನ್ನು ಪಾವತಿಸಲು ಸಚಿವರಿಗೆ ಆರು ತಿಂಗಳ ಕಾಲಾವಕಾಶ ನೀಡಲಾಗಿದೆ. ಒಟ್ಟು ₹3 ಕೋಟಿ ದಂಡವನ್ನು ಮೂರು ಕಂತುಗಳಲ್ಲಿ ಪಾವತಿಸುವಂತೆ ಸೂಚಿಸಲಾಗಿದೆ ಎಂದು ವರದಿಯಾಗಿದೆ.

ಪಟಾಕಿ ತರಲು ಕರೆದೊಯ್ದು ಬಾಲಕನ ಕೊಲೆ? ಅಪಘಾತದ ಕಥೆ ಕಟ್ಟಿದ್ದ ಆರೋಪಿ ಅರೆಸ್ಟ್!

0

ಬೆಂಗಳೂರು: ಬೆಂಗಳೂರಿನ ಯಲಹಂಕದಲ್ಲಿ 13 ವರ್ಷದ ಬಾಲಕನನ್ನು ಅಪಹರಿಸಿ ಕೊಲೆ ಮಾಡಿರುವ ಆರೋಪ ಕೇಳಿಬಂದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಪಕ್ಕದ ಮನೆಯ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಯಲಹಂಕದ ವಿನಾಯಕ ನಗರದ ನಿವಾಸಿ ಪ್ರಜ್ವಲ್ ಮೃತ ಬಾಲಕ.

ಪ್ರಾಥಮಿಕ ಮಾಹಿತಿಯ ಪ್ರಕಾರ, ಪಕ್ಕದ ಮನೆಯ ಭಾಸ್ಕರ್ ರೆಡ್ಡಿ ಎಂಬಾತ ಬಾಲಕನನ್ನು ಕಾರಿನಲ್ಲಿ ಕರೆದೊಯ್ದಿದ್ದ. ಗಣಪತಿ ವಿಸರ್ಜನೆ ಹಿನ್ನೆಲೆಯಲ್ಲಿ ಪಟಾಕಿ ತರಲು ಹೋಗೋಣ ಎಂದು ಹೇಳಿ ಬಾಲಕನನ್ನು ಕಾರಿನಲ್ಲಿ ಕರೆದೊಯ್ದಿದ್ದ ಎನ್ನಲಾಗಿದೆ. ಬಳಿಕ ಬಾಲಕನನ್ನು ಕಾರಿನಲ್ಲೇ ಇರಿಸಿಕೊಂಡು ಹಣಕ್ಕೆ ಬೇಡಿಕೆ ಇಟ್ಟಿದ್ದಾನೆ ಎಂದು ಆರೋಪಿಸಲಾಗಿದೆ.

ಬಾಲಕನಿಂದಲೇ ವಿಡಿಯೋ ಮಾಡಿಸಿ ಆತನ ಪೋಷಕರಿಗೆ ಬೆದರಿಕೆ ಹಾಕಿದ್ದ ಎನ್ನಲಾಗಿದೆ. ಬಳಿಕ ಮದ್ಯದ ಅಮಲಿನಲ್ಲಿ ಬಾಲಕನ ಮೇಲೆ ಹಲ್ಲೆ ನಡೆಸಿ, ಹಾಲೋಬ್ರಿಕ್ಸ್‌ನಿಂದ ಹೊಡೆದು ಕೊಲೆ ಮಾಡಿದ್ದಾನೆ ಎಂದು ಪೊಲೀಸರು ಶಂಕಿಸಿದ್ದಾರೆ.

ಕೊಲೆ ಬಳಿಕ ಬಾಲಕನ ಮೃತದೇಹವನ್ನು ಕಾರಿನ ಡಿಕ್ಕಿಯಲ್ಲಿಟ್ಟು ಭಾಸ್ಕರ್ ರೆಡ್ಡಿ ಆಂಧ್ರಪ್ರದೇಶದ ಕಡೆಗೆ ತೆರಳುತ್ತಿದ್ದ ಎನ್ನಲಾಗಿದೆ. ಈ ವೇಳೆ ಆತಂಕಗೊಂಡಿದ್ದ ಆರೋಪಿ ಕಾರನ್ನು ಗೋಡೆಗೆ ಡಿಕ್ಕಿ ಹೊಡೆಸಿಕೊಂಡಿದ್ದಾನೆ. ನಂತರ ಬಳ್ಳಾರಿ ಸರ್ವೀಸ್ ರಸ್ತೆಯಲ್ಲಿ ಮತ್ತೊಂದು ವಾಹನಕ್ಕೆ ಡಿಕ್ಕಿ ಹೊಡೆದು ಸರಣಿ ಅಪಘಾತಕ್ಕೆ ಕಾರಣನಾಗಿದ್ದಾನೆ.

ಅಪಘಾತದ ಬಳಿಕ ಸ್ಥಳೀಯರು ಭಾಸ್ಕರ್ ರೆಡ್ಡಿಯನ್ನು ಹಿಡಿದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಚಿಕ್ಕಜಾಲ ಪೊಲೀಸರು ಕಾರನ್ನು ಪರಿಶೀಲಿಸಿದಾಗ ಡಿಕ್ಕಿಯಲ್ಲಿದ್ದ ಬಾಲಕನ ಮೃತದೇಹ ಪತ್ತೆಯಾಗಿದೆ.

ಪೊಲೀಸರ ವಿಚಾರಣೆ ವೇಳೆ ಬಾಲಕ ಅಪಘಾತದಲ್ಲಿ ಮೃತಪಟ್ಟಿದ್ದಾನೆ ಎಂದು ಆರೋಪಿ ಹೇಳಿಕೆ ನೀಡಿದ್ದ ಎನ್ನಲಾಗಿದೆ. ಆದರೆ ಪ್ರಾಥಮಿಕ ತನಿಖೆಯಲ್ಲಿ ಬಾಲಕನನ್ನು ಹಲ್ಲೆ ನಡೆಸಿ ಕೊಲೆ ಮಾಡಿರುವುದು ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸದ್ಯ ಭಾಸ್ಕರ್ ರೆಡ್ಡಿಯನ್ನು ಬಂಧಿಸಿ ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ.