ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಿರ್ದೇಶಕ, ನಟ ಹಾಗೂ ಚಿತ್ರಕಥೆಗಾರ ಕೆ. ಭಾಗ್ಯರಾಜ್ ಅವರು ಶನಿವಾರ ಚೆನ್ನೈನಲ್ಲಿ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. 73 ವರ್ಷದ ಭಾಗ್ಯರಾಜ್ ಅವರ ಅಗಲಿಕೆ ತಮಿಳು ಚಿತ್ರರಂಗ ಸೇರಿದಂತೆ ದೇಶದ ಸಿನಿಪ್ರೇಮಿಗಳಿಗೆ ಆಘಾತ ಉಂಟುಮಾಡಿದೆ.
ತಮ್ಮ ವಿಭಿನ್ನ ಕಥಾಹಂದರ ಹಾಗೂ ಚಿತ್ರಕಥೆಗಳ ಮೂಲಕ ‘ಚಿತ್ರಕಥೆಯ ರಾಜ’ ಎಂದೇ ಖ್ಯಾತಿ ಪಡೆದಿದ್ದ ಅವರು, ಸಾವಿನ ಬಳಿಕವೂ ನೇತ್ರದಾನದ ಮೂಲಕ ಮಾನವೀಯತೆಯ ಮಾದರಿಯಾಗಿದ್ದಾರೆ.
ಬಾಳಿರುವಾಗಲೇ ತಮ್ಮ ನೇತ್ರಗಳನ್ನು ದಾನ ಮಾಡುವುದಾಗಿ ಕೆ. ಭಾಗ್ಯರಾಜ್ ಪ್ರತಿಜ್ಞೆ ಮಾಡಿದ್ದರು. ಅವರ ನಿಧನದ ಬಳಿಕ ಕುಟುಂಬಸ್ಥರು ಅವರ ಅಂತಿಮ ಇಚ್ಛೆಯನ್ನು ಗೌರವಿಸಿ ತಕ್ಷಣವೇ ಕಣ್ಣಿನ ಆಸ್ಪತ್ರೆಗೆ ಮಾಹಿತಿ ನೀಡಿದ್ದಾರೆ. ಬಳಿಕ ವೈದ್ಯರ ತಂಡವು ಅವರ ನಿವಾಸಕ್ಕೆ ಭೇಟಿ ನೀಡಿ ಕಾರ್ನಿಯಾ ಸಂಗ್ರಹಿಸುವ ಮೂಲಕ ನೇತ್ರದಾನ ಪ್ರಕ್ರಿಯೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ.
ಭಾಗ್ಯರಾಜ್ ಅವರ ನಿವಾಸಕ್ಕೆ ಭೇಟಿ ನೀಡಿ ಅಂತಿಮ ನಮನ ಸಲ್ಲಿಸಿದ ತೆಲಂಗಾಣದ ಮಾಜಿ ರಾಜ್ಯಪಾಲೆ ತಮಿಳಿಸೈ ಸೌಂದರರಾಜನ್ ಅವರು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಸಂತಾಪ ಸೂಚಿಸಿದ್ದಾರೆ. ಭಾಗ್ಯರಾಜ್ ಅವರ ನೇತ್ರದಾನದ ನಿರ್ಧಾರವನ್ನು ಶ್ಲಾಘಿಸಿರುವ ಅವರು, ಮರಣಾನಂತರವೂ ಮತ್ತೊಬ್ಬರ ಬದುಕಿಗೆ ಬೆಳಕಾಗಬೇಕು ಎಂಬ ಅವರ ಮಾನವೀಯ ಚಿಂತನೆ ಸಮಾಜಕ್ಕೆ ಮಾದರಿಯಾಗಿದೆ ಎಂದು ಹೇಳಿದ್ದಾರೆ.
ಸಾರ್ವಜನಿಕ ಜೀವನದಲ್ಲಿ ಗುರುತಿಸಿಕೊಂಡಿರುವ ಗಣ್ಯರು ನೇತ್ರದಾನ ಮಾಡಿದಾಗ ಅದು ಸಮಾಜದಲ್ಲಿ ಜಾಗೃತಿ ಮೂಡಿಸಲು ಸಹಕಾರಿಯಾಗುತ್ತದೆ. ಭಾರತದಲ್ಲಿ ಪ್ರತಿವರ್ಷ ಸುಮಾರು 1 ಲಕ್ಷದಿಂದ 2 ಲಕ್ಷ ಜನರಿಗೆ ಕಾರ್ನಿಯಾ ಕಸಿ ಅಗತ್ಯವಿದ್ದರೂ, ಕೇವಲ 45ರಿಂದ 50 ಸಾವಿರ ಕಾರ್ನಿಯಾಗಳು ಮಾತ್ರ ಲಭ್ಯವಾಗುತ್ತಿವೆ ಎಂದು ತಮಿಳಿಸೈ ಸೌಂದರರಾಜನ್ ಕಳವಳ ವ್ಯಕ್ತಪಡಿಸಿದ್ದಾರೆ.
ಚಿತ್ರರಂಗದಲ್ಲಿ ತಮ್ಮ ಪ್ರತಿಭೆಯಿಂದ ಅಚ್ಚಳಿಯದ ಛಾಪು ಮೂಡಿಸಿದ್ದ ಕೆ. ಭಾಗ್ಯರಾಜ್, ಜೀವನದ ಕೊನೆಯ ಕ್ಷಣದಲ್ಲಿಯೂ ನೇತ್ರದಾನದ ಮೂಲಕ ಮಾನವೀಯತೆಯ ಮೌಲ್ಯವನ್ನು ಎತ್ತಿಹಿಡಿದಿದ್ದಾರೆ. ಅವರ ಈ ಕಾರ್ಯವು ಸಮಾಜದಲ್ಲಿ ನೇತ್ರದಾನದ ಬಗ್ಗೆ ಇನ್ನಷ್ಟು ಜಾಗೃತಿ ಮೂಡಿಸುವಂತಾಗಿದೆ.

