Home Blog

ವಾರ್ತಾ ಇಲಾಖೆಗೆ ಐಪಿಎಸ್ ಟಚ್: ನೂತನ ಆಯುಕ್ತರಾಗಿ ಎಂ.ಎನ್. ಅನುಚೇತ್ ಅಧಿಕಾರ ಸ್ವೀಕಾರ

ಬೆಂಗಳೂರು: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನೂತನ ಆಯುಕ್ತರಾಗಿ ಹಿರಿಯ ಐಪಿಎಸ್ ಅಧಿಕಾರಿ ಎಂ.ಎನ್. ಅನುಚೇತ್ ಗುರುವಾರ ಅಧಿಕೃತವಾಗಿ ಅಧಿಕಾರ ಸ್ವೀಕರಿಸಿದರು. ಇಲಾಖೆಯ ನಿರ್ಗಮಿತ ಆಯುಕ್ತ ಹಾಗೂ ಎಡಿಜಿಪಿ ಹೇಮಂತ್ ಎಂ. ನಿಂಬಾಳ್ಕರ್ ಅವರು ಅಧಿಕಾರ ಹಸ್ತಾಂತರ ಮಾಡಿದರು.

ಅಧಿಕಾರ ಸ್ವೀಕಾರದ ಸಂದರ್ಭದಲ್ಲಿ ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿ ನೂತನ ಆಯುಕ್ತರಿಗೆ ಶುಭಾಶಯ ಕೋರಿದರು. ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಜೊತೆಗೆ ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆಯ ಆಯುಕ್ತರ ಹೆಚ್ಚುವರಿ ಹೊಣೆಗಾರಿಕೆಯನ್ನು ಸಹ ಅನುಚೇತ್ ಅವರಿಗೆ ವಹಿಸಿದೆ.

ಕೋಲಾರ ಜಿಲ್ಲೆಯ ಮೂಲದ ಅನುಚೇತ್ ಅವರು ಬೆಂಗಳೂರಿನ ಆರ್.ವಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ ಪದವಿ ಪಡೆದಿದ್ದು, 2008ರ ಸಿವಿಲ್ ಸರ್ವಿಸ್ ಪರೀಕ್ಷೆಯಲ್ಲಿ ಯಶಸ್ಸು ಸಾಧಿಸಿ 2009ರ ಕರ್ನಾಟಕ ಕೇಡರ್‌ನ ಐಪಿಎಸ್ ಅಧಿಕಾರಿಯಾಗಿ ಆಯ್ಕೆಯಾಗಿದ್ದರು.

2011ರಲ್ಲಿ ಪುತ್ತೂರಿನಲ್ಲಿ ಸಹಾಯಕ ಪೊಲೀಸ್ ಅಧೀಕ್ಷಕರಾಗಿ ಸೇವೆ ಆರಂಭಿಸಿದ ಅವರು, ಬಳಿಕ ಸಿಐಡಿ ಎಸ್ಪಿ, ಬೆಂಗಳೂರು ಕೇಂದ್ರ ವಿಭಾಗದ ಡಿಸಿಪಿ ಹಾಗೂ ವಿವಿಧ ಪ್ರಮುಖ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿದ್ದಾರೆ. ಇತ್ತೀಚೆಗೆ ಬೆಂಗಳೂರು ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತರಾಗಿ ಸೇವೆ ಸಲ್ಲಿಸಿದ್ದ ಅವರು, ಸಂಚಾರ ನಿರ್ವಹಣೆಯಲ್ಲಿ ಕೃತಕ ಬುದ್ಧಿಮತ್ತೆ ಆಧಾರಿತ ತಂತ್ರಜ್ಞಾನ ಅಳವಡಿಕೆಗೆ ವಿಶೇಷ ಕೊಡುಗೆ ನೀಡಿದ್ದರು.

ಪೊಲೀಸ್ ಇಲಾಖೆಯಲ್ಲಿ ನಡೆಸಿದ ಪರಿಣಾಮಕಾರಿ ತನಿಖೆ ಹಾಗೂ ಆಡಳಿತಾತ್ಮಕ ಸಾಧನೆಗಾಗಿ ಅವರಿಗೆ ಕೇಂದ್ರ ಗೃಹ ಸಚಿವರ ಅತ್ಯುತ್ತಮ ತನಿಖಾ ಪದಕವೂ ಲಭಿಸಿದೆ. ವಾರ್ತಾ ಇಲಾಖೆಗೆ ತಂತ್ರಜ್ಞಾನ ಆಧಾರಿತ ಕಾರ್ಯಪದ್ಧತಿ ಮತ್ತು ಆಡಳಿತಾತ್ಮಕ ಚುರುಕುತನ ತರುವ ನಿರೀಕ್ಷೆ ವ್ಯಕ್ತವಾಗಿದೆ.

ಈ ಸಂದರ್ಭದಲ್ಲಿ ಇಲಾಖೆಯ ಜಂಟಿ ನಿರ್ದೇಶಕರಾದ ಮಂಜುನಾಥ ಡೊಳ್ಳಿನ್, ಸಿದ್ದೇಶ್ವರಪ್ಪ ಜಿ.ಬಿ., ಸಿ.ಆರ್. ನವೀನ್, ಉಪನಿರ್ದೇಶಕರಾದ ಬಿ.ಕೆ. ರಾಮಲಿಂಗಪ್ಪ, ಶಫಿ ಸಾದುದ್ದೀನ್ ಸೇರಿದಂತೆ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.

ತುಂಗಭದ್ರಾ ಡ್ಯಾಂ ರೆಕಾರ್ಡ್ ರಿನೋವೇಶನ್: ಹಳೆಯ ಗೇಟ್‌ಗಳಿಗೆ ವಿದಾಯ – 33 ನೂತನ ಗೇಟ್ ಉದ್ಘಾಟನೆಗೆ 3 ರಾಜ್ಯದ ಸಿಎಂ ಭಾಗಿ

0

ಕೊಪ್ಪಳ: ತುಂಗಭದ್ರಾ ಜಲಾಶಯದಲ್ಲಿ 73 ವರ್ಷಗಳ ಬಳಿಕ ನಡೆದ ಕ್ರೆಸ್ಟ್ ಗೇಟ್ ಬದಲಾವಣೆ ಕಾರ್ಯ ದೇಶದ ನೀರಾವರಿ ಇತಿಹಾಸದಲ್ಲಿ ಮಹತ್ವದ ಅಧ್ಯಾಯವಾಗಿ ಗುರುತಿಸಿಕೊಂಡಿದೆ. 33 ನೂತನ ಗೇಟ್‌ಗಳ ಲೋಕಾರ್ಪಣೆ ಗುರುವಾರ ಅಧಿಕೃತವಾಗಿ ನೆರವೇರಿಸಲಾಯಿತು.

ಮುನಿರಾಬಾದ್ ಸಮೀಪದ ಜಲಾಶಯದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಕರ್ನಾಟಕ, ಆಂಧ್ರಪ್ರದೇಶ ಹಾಗೂ ತೆಲಂಗಾಣ ರಾಜ್ಯಗಳ ಮುಖ್ಯಮಂತ್ರಿಗಳು ಹಾಗೂ ಕೇಂದ್ರ ಜಲಶಕ್ತಿ ಸಚಿವರು ಒಂದೇ ವೇದಿಕೆಯಲ್ಲಿ ಭಾಗವಹಿಸಿದ್ದು ಅಪರೂಪದ ರಾಜಕೀಯ ಹಾಗೂ ಆಡಳಿತಾತ್ಮಕ ಸಮಾಗಮವಾಗಿ ಗಮನ ಸೆಳೆಯಿತು. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಎನ್. ಚಂದ್ರಬಾಬು ನಾಯ್ಡು, ಎ. ರೇವಂತ್ ರೆಡ್ಡಿ ಹಾಗೂ ಕೇಂದ್ರ ಸಚಿವ ಸಿ.ಆರ್. ಪಾಟೀಲ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಕಾರ್ಯಕ್ರಮದ ಪ್ರಮುಖ ಹಂತವಾಗಿ 18 ರಿಂದ 21ನೇ ಕ್ರೆಸ್ಟ್ ಗೇಟ್‌ಗಳಿಗೆ ಪೂಜೆ ಸಲ್ಲಿಸಲಾಯಿತು. ನಂತರ ರಿಮೋಟ್ ಮೂಲಕ ನೂತನ ಗೇಟ್‌ಗಳ ಉದ್ಘಾಟನೆ ನಡೆಯಿತು. ನಾಲ್ವರು ನಾಯಕರು ಪ್ರತ್ಯೇಕವಾಗಿ ಗೇಟ್‌ಗಳನ್ನು ಚಾಲನೆಗೊಳಿಸಿದರು.

ಈ ನವೀಕರಣದ ಹಿನ್ನೆಲೆ 2024ರ ಆಗಸ್ಟ್‌ನಲ್ಲಿ 19ನೇ ಗೇಟ್ ಕೊಚ್ಚಿ ಹೋಗಿದ್ದ ಘಟನೆ ಪ್ರಮುಖ ಕಾರಣವಾಗಿತ್ತು. ಅದರ ನಂತರ ಕೇಂದ್ರ ಜಲಶಕ್ತಿ ಆಯೋಗ ಹಾಗೂ ಡ್ಯಾಂ ಸುರಕ್ಷತಾ ತಂಡ ನಡೆಸಿದ ತಾಂತ್ರಿಕ ಪರಿಶೀಲನೆ ಆಧಾರವಾಗಿ 33 ಗೇಟ್‌ಗಳನ್ನು ಬದಲಾಯಿಸಲು ಶಿಫಾರಸು ಮಾಡಲಾಗಿತ್ತು. ಸುಮಾರು 51 ಕೋಟಿ ರೂ. ವೆಚ್ಚದಲ್ಲಿ ಯೋಜನೆ ಪೂರ್ಣಗೊಂಡಿದೆ. ಹಳೆಯ ಗೇಟ್‌ಗಳು 1953ರಿಂದ ಸೇವೆಯಲ್ಲಿ ಇದ್ದವು ಎಂಬುದು ಅಧಿಕಾರಿಗಳ ಮಾಹಿತಿ.

ಪ್ರತಿ ಗೇಟ್ 20 ಅಡಿ ಎತ್ತರ, 60 ಅಡಿ ಅಗಲ ಹಾಗೂ 48.50 ಟನ್ ತೂಕ ಹೊಂದಿದ್ದು, ಜಲಾಶಯದ ಸುರಕ್ಷತೆ ಹಾಗೂ ನೀರಿನ ನಿಯಂತ್ರಣ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ನಿರೀಕ್ಷೆ ಇದೆ.

ಕಾರ್ಯಕ್ರಮದ ಸಂದರ್ಭದಲ್ಲಿ ನವಲಿ ಸಮಾನಾಂತರ ಜಲಾಶಯ, ಹೂಳು ಸಮಸ್ಯೆ ಹಾಗೂ ನೆನೆಗುದಿಗೆ ಬಿದ್ದ ನೀರಾವರಿ ಯೋಜನೆಗಳ ಕುರಿತು ಅನೌಪಚಾರಿಕ ಚರ್ಚೆ ನಡೆದಿರುವ ಸಾಧ್ಯತೆಯೂ ಇದೆ. ಈ ಕುರಿತು ಕರ್ನಾಟಕ ಸರ್ಕಾರ ಈಗಾಗಲೇ ಪ್ರಸ್ತಾವನೆ ಸಿದ್ಧಪಡಿಸಿರುವುದು ಗಮನಾರ್ಹ.

ಸಾವಿರಾರು ರೈತರ ಸಮ್ಮುಖದಲ್ಲಿ ನಡೆದ ಈ ಕಾರ್ಯಕ್ರಮಕ್ಕಾಗಿ ಭಾರೀ ಪೊಲೀಸ್ ಭದ್ರತೆ ಒದಗಿಸಲಾಗಿತ್ತು. ನೀರಾವರಿ ತಜ್ಞ ಕನ್ನಯ್ಯ ನಾಯ್ಡು ಸಹ ಉಪಸ್ಥಿತರಿದ್ದು ತಾಂತ್ರಿಕ ಪ್ರಕ್ರಿಯೆಯಲ್ಲಿ ಭಾಗವಹಿಸಿದರು.

42 ಕಳ್ಳತನದ ಬೈಕ್ ಪತ್ತೆ; ಕೋರ್ಟ್ ಅಲೆದಾಟಕ್ಕೆ ಬ್ರೇಕ್, ಠಾಣೆಯಲ್ಲೇ ವಾಹನ ಹಸ್ತಾಂತರ

ದೇವನಹಳ್ಳಿ: ಸರಣಿ ಬೈಕ್ ಕಳ್ಳತನ ಪ್ರಕರಣ ಭೇದಿಸಿರುವ ವಿಜಯಪುರ ಠಾಣೆ ಪೊಲೀಸರು 42 ಕಳ್ಳತನದ ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದು, ಇದೀಗ ಅವುಗಳನ್ನು ಮಾಲೀಕರಿಗೆ ಮರಳಿಸುವ ಕಾರ್ಯಕ್ಕೂ ಹೊಸ ಮಾದರಿ ರೂಪಿಸಿದ್ದಾರೆ. ಕಳೆದುಹೋದ ಬೈಕ್‌ಗಳ ನಿರೀಕ್ಷೆಯನ್ನೇ ಕೈಬಿಟ್ಟಿದ್ದ ಸಂತ್ರಸ್ತರಿಗೆ ಇದು ಸಂತಸದ ಸುದ್ದಿಯಾಗಿದೆ.

ಸಾಮಾನ್ಯವಾಗಿ ಕಳ್ಳತನವಾದ ವಾಹನ ಪತ್ತೆಯಾದ ಬಳಿಕ ಅದನ್ನು ಪಡೆಯಲು ನ್ಯಾಯಾಲಯದ ಪ್ರಕ್ರಿಯೆ ಪೂರ್ಣಗೊಳಿಸಬೇಕಾಗುತ್ತದೆ. ಆದರೆ ವಿಜಯಪುರ ಪೊಲೀಸರು ಜಾರಿಗೆ ತಂದಿರುವ ಜನಸ್ನೇಹಿ ಕ್ರಮದಡಿ, ವಾಹನ ಮಾಲೀಕರು ಅಗತ್ಯ ದಾಖಲೆಗಳು ಮತ್ತು ಬಾಂಡ್ ಸಲ್ಲಿಸಿ ನೇರವಾಗಿ ಪೊಲೀಸ್ ಠಾಣೆಯಲ್ಲೇ ತಮ್ಮ ಬೈಕ್‌ಗಳನ್ನು ವಾಪಸ್ ಪಡೆಯುತ್ತಿದ್ದಾರೆ.

ಕಳ್ಳತನದ ವಾಹನಗಳನ್ನು ಕೇವಲ 2 ರಿಂದ 3 ಸಾವಿರ ರೂಪಾಯಿಗೆ ಮಾರಾಟ ಮಾಡುತ್ತಿದ್ದ ಖಲೀಲ್ ಅಹ್ಮದ್ ಬಂಧನದ ಬಳಿಕ 42 ಬೈಕ್‌ಗಳು ಪತ್ತೆಯಾಗಿದ್ದು, ಸಾರ್ವಜನಿಕರು ಪೊಲೀಸರ ಕಾರ್ಯಾಚರಣೆ ಮತ್ತು ವಾಹನ ವಾಪಸ್ ನೀಡುವ ಕ್ರಮಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಸಾಯುವುದಕ್ಕೂ ಮುನ್ನ ಕೃಷಿ ತಾಪಂಡಗೆ ಸಂದೇಶ ಕಳುಹಿಸಿದ್ದ ವೈಶಾಕ್

ಬೆಂಗಳೂರು: ನಟಿ ಕೃಷಿ ತಾಪಂಡ ಅವರ ಆರ್‌ಆರ್ ನಗರ ನಿವಾಸದಲ್ಲಿ ಉದ್ಯಮಿ ವೈಶಾಕ್ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಆತ್ಮಹತ್ಯೆಗೆ ಮುನ್ನ ವೈಶಾಕ್, “ನನಗೆ ಜೀವನವೇ ಸಾಕಾಗಿದೆ, ಬದುಕಲು ಇಷ್ಟವಿಲ್ಲ” ಎಂದು ನಟಿಗೆ ವಾಟ್ಸಾಪ್ ಸಂದೇಶ ಕಳುಹಿಸಿದ್ದಾನೆ ಎನ್ನಲಾಗಿದೆ. ಈ ವೇಳೆ ‘ಕ್ಷೇಮವನ’ದಲ್ಲಿದ್ದ ಕೃಷಿ ತಾಪಂಡ, ಯಾವುದೇ ತಪ್ಪು ನಿರ್ಧಾರ ಕೈಗೊಳ್ಳಬೇಡ ಎಂದು ಸಮಾಧಾನಪಡಿಸಿ, ಮನೆಗೆ ಬರುತ್ತಿರುವುದಾಗಿ ತಿಳಿಸಿದ್ದರು.

ಆದರೆ ನಟಿ ಮನೆಗೆ ತಲುಪುವಷ್ಟರಲ್ಲಿ ವೈಶಾಕ್ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಬಳಿಕ ಕೃಷಿ ತಾಪಂಡ ರಾಜರಾಜೇಶ್ವರಿ ನಗರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಿದ್ದಾರೆ. ಪ್ರಕರಣದ ಕುರಿತು ತನಿಖೆ ಮುಂದುವರಿದಿದೆ.

ತಂಡದ ಏಕಾಗ್ರತೆಗೆ ಧಕ್ಕೆ ತಂದಿದ್ದು ನನ್ನ ತಪ್ಪು: ಅಮಾನತು ಬಳಿಕ ಭಾವನಾತ್ಮಕವಾಗಿ ಕ್ಷಮೆ ಕೇಳಿದ ಬೆನ್ ಸ್ಟೋಕ್ಸ್

0

ಲಂಡನ್: ನ್ಯೂಝಿಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಿಂದ ಅಮಾನತುಗೊಂಡು ಹೊರಗುಳಿದಿದ್ದ ಇಂಗ್ಲೆಂಡ್ ತಂಡದ ನಾಯಕ ಬೆನ್ ಸ್ಟೋಕ್ಸ್ ಇದೀಗ ಮತ್ತೆ ತಂಡಕ್ಕೆ ಮರಳಿದ್ದಾರೆ. ತಂಡಕ್ಕೆ ವಾಪಸಾದ ಬೆನ್ನಲ್ಲೇ ತಮ್ಮ ನಡೆ ಇಡೀ ತಂಡದ ಮೇಲೆ ಪ್ರತಿಕೂಲ ಪರಿಣಾಮ ಬೀರಿದೆ ಎಂದು ಒಪ್ಪಿಕೊಂಡಿರುವ ಸ್ಟೋಕ್ಸ್, ಸಹ ಆಟಗಾರರ ಮುಂದೆ ಬಹಿರಂಗವಾಗಿ ಕ್ಷಮೆಯಾಚಿಸಿದ್ದಾರೆ.

ಜೂನ್ 8ರಂದು ಇಂಗ್ಲೆಂಡ್ ಹಾಗೂ ನ್ಯೂಝಿಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯ ಮುಕ್ತಾಯವಾದ ಬಳಿಕ ಬೆನ್ ಸ್ಟೋಕ್ಸ್ ಮತ್ತು ವೇಗದ ಬೌಲರ್ ಗಸ್ ಅಟ್ಕಿನ್ಸನ್ ಲಂಡನ್‌ನ ನೈಟ್‌ಕ್ಲಬ್‌ಗೆ ಭೇಟಿ ನೀಡಿದ್ದರು. ಈ ವೇಳೆ ನಡೆದ ಘಟನೆಯ ಕುರಿತು ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿ (ECB) ತನಿಖೆ ನಡೆಸಿತ್ತು.

ತನಿಖೆಯಲ್ಲಿ ಕ್ಲಬ್‌ನಲ್ಲಿ ನಡೆದ ಸಂಘರ್ಷದಲ್ಲಿ ಸ್ಟೋಕ್ಸ್ ಮತ್ತು ಅಟ್ಕಿನ್ಸನ್ ಅವರ ಯಾವುದೇ ನೇರ ತಪ್ಪು ಕಂಡುಬರದಿದ್ದರೂ, ತಂಡದ ಕರ್ಫ್ಯೂ ನಿಯಮ ಉಲ್ಲಂಘಿಸಿದ್ದ ಕಾರಣ ಇಬ್ಬರಿಗೂ ಲಿಖಿತ ಎಚ್ಚರಿಕೆ ನೀಡಿ ಎರಡನೇ ಟೆಸ್ಟ್ ಪಂದ್ಯದಿಂದ ಅಮಾನತುಗೊಳಿಸಲಾಗಿತ್ತು. ಹೀಗಾಗಿ ಎರಡನೇ ಪಂದ್ಯದಲ್ಲಿ ಸ್ಟೋಕ್ಸ್ ತಂಡದಿಂದ ಹೊರಗುಳಿದಿದ್ದರು.

ಈಗ ಮೂರನೇ ಹಾಗೂ ನಿರ್ಣಾಯಕ ಟೆಸ್ಟ್ ಪಂದ್ಯಕ್ಕೂ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದ ಬೆನ್ ಸ್ಟೋಕ್ಸ್, ತಮ್ಮ ತಪ್ಪಿನಿಂದಾಗಿ ತಂಡದ ವಾತಾವರಣದ ಮೇಲೆ ನಕಾರಾತ್ಮಕ ಪರಿಣಾಮ ಉಂಟಾಗಿದೆ ಎಂದು ಒಪ್ಪಿಕೊಂಡರು.

“ಒಬ್ಬ ನಾಯಕನಾಗಿ ನಡೆದ ಘಟನೆಗೆ ಸಂಪೂರ್ಣ ಜವಾಬ್ದಾರಿ ನನ್ನದೇ. ನನ್ನ ನಡೆ ತಂಡದ ಗಮನವನ್ನು ಬೇರೆಡೆ ಸೆಳೆದಿತು. ಇಂಗ್ಲೆಂಡ್ ಪರ ಹೊಸದಾಗಿ ಟೆಸ್ಟ್ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ ಜೇಮ್ಸ್ ರಿವ್, ಜೋರ್ಡನ್ ಕಾಕ್ಸ್ ಹಾಗೂ ಸೋನಿ ಬೇಕರ್ ಅವರ ವಿಶೇಷ ಕ್ಷಣಗಳು ಈ ವಿವಾದದ ನಡುವೆ ಮಂಕಾದವು,” ಎಂದು ಸ್ಟೋಕ್ಸ್ ಹೇಳಿದ್ದಾರೆ.

ಇದರ ಜೊತೆಗೆ, ತಮ್ಮ ಅನುಪಸ್ಥಿತಿಯಲ್ಲಿ ಜೋ ರೂಟ್ ನಾಯಕತ್ವದಲ್ಲಿ ಕಣಕ್ಕಿಳಿದ ಇಂಗ್ಲೆಂಡ್ ತಂಡವು ಕೆನ್ನಿಂಗ್ಟನ್ ಓವಲ್ ಮೈದಾನದಲ್ಲಿ ನಡೆದ ಎರಡನೇ ಟೆಸ್ಟ್ ಪಂದ್ಯದಲ್ಲಿ 253 ರನ್‌ಗಳ ಭಾರಿ ಸೋಲು ಅನುಭವಿಸಿತು. ಈ ಸೋಲಿನ ಬಳಿಕ ಹಂಗಾಮಿ ನಾಯಕ ಜೋ ರೂಟ್ ಟೀಕೆಗೆ ಗುರಿಯಾಗಬೇಕಾಯಿತು ಎಂಬುದನ್ನೂ ಸ್ಟೋಕ್ಸ್ ಉಲ್ಲೇಖಿಸಿದರು.

“ಲಾರ್ಡ್ಸ್‌ನಲ್ಲಿ ಮೊದಲ ಟೆಸ್ಟ್ ಗೆಲುವಿನ ಸಂಭ್ರಮಾಚರಣೆಯ ವೇಳೆ ಮಧ್ಯರಾತ್ರಿ ಕರ್ಫ್ಯೂ ನಿಯಮ ಉಲ್ಲಂಘಿಸಿ ನೈಟ್‌ಕ್ಲಬ್‌ನಲ್ಲಿ ಉಳಿದುಕೊಂಡದ್ದು ನನ್ನ ತಪ್ಪು. ಈ ಘಟನೆ ಇಡೀ ತಂಡದ ಏಕಾಗ್ರತೆಗೆ ಧಕ್ಕೆ ತಂದಿತು. ಅದಕ್ಕಾಗಿ ನಾನು ತಂಡದ ಎಲ್ಲ ಸದಸ್ಯರ ಬಳಿ ಕ್ಷಮೆ ಕೇಳುತ್ತೇನೆ,” ಎಂದು ಸ್ಟೋಕ್ಸ್ ತಿಳಿಸಿದ್ದಾರೆ.

ಧಾರವಾಡ ಜಿಲ್ಲಾ ಕೋರ್ಟ್ʼಗೆ ಮತ್ತೆ ಬಾಂಬ್ ಬೆದರಿಕೆ: ವಾರದೊಳಗೆ 2ನೇ ಬಾರಿ ಆತಂಕ ಸೃಷ್ಟಿಸಿದ ದುಷ್ಕರ್ಮಿಗಳು

ಧಾರವಾಡ: ಧಾರವಾಡ ಜಿಲ್ಲಾ ನ್ಯಾಯಾಲಯಕ್ಕೆ ವಾರದೊಳಗೆ ಎರಡನೇ ಬಾರಿ ಬಾಂಬ್ ಬೆದರಿಕೆ ಬಂದಿದ್ದು, ಇ-ಮೇಲ್ ಮೂಲಕ ಕಳುಹಿಸಲಾದ ಸಂದೇಶದಿಂದ ನ್ಯಾಯಾಲಯದ ಆವರಣದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು.

ಜಿಲ್ಲಾ ನ್ಯಾಯಾಲಯದ ಆಡಳಿತ ಕಚೇರಿಗೆ ಬಂದಿರುವ ಇ-ಮೇಲ್‌ನಲ್ಲಿ ಕೋರ್ಟ್ ಹಾಗೂ ನ್ಯಾಯಾಲಯ ಸಂಕೀರ್ಣದಲ್ಲಿ ಬಾಂಬ್ ಇರಿಸಲಾಗಿದೆ ಎಂದು ಬೆದರಿಕೆ ಹಾಕಲಾಗಿದೆ. ಮಾಹಿತಿ ದೊರೆಯುತ್ತಿದ್ದಂತೆ ಪೊಲೀಸರು ಹಾಗೂ ಭದ್ರತಾ ಸಿಬ್ಬಂದಿ ತಕ್ಷಣ ಕಾರ್ಯಪ್ರವೃತ್ತರಾಗಿ ಶೋಧ ಕಾರ್ಯಾಚರಣೆ ಆರಂಭಿಸಿದರು.

ಮುನ್ನೆಚ್ಚರಿಕಾ ಕ್ರಮವಾಗಿ ನ್ಯಾಯಾಲಯದ ಸಿಬ್ಬಂದಿ, ವಕೀಲರು ಹಾಗೂ ಸಾರ್ವಜನಿಕರನ್ನು ಕೋರ್ಟ್ ಆವರಣದಿಂದ ಹೊರಗೆ ತೆರಳುವಂತೆ ಸೂಚಿಸಲಾಯಿತು. ಬಳಿಕ ಪೊಲೀಸರು ಹಾಗೂ ಬಾಂಬ್ ಪತ್ತೆ ಮತ್ತು ನಿಷ್ಕ್ರಿಯ ದಳದ ಸಿಬ್ಬಂದಿ ನ್ಯಾಯಾಲಯ ಸಂಕೀರ್ಣದಲ್ಲಿ ಸಮಗ್ರ ತಪಾಸಣೆ ನಡೆಸಿದರು.

ಇದೇ ರೀತಿಯ ಬೆದರಿಕೆ ಸಂದೇಶ ಜೂನ್ 19ರಂದು ಕೂಡ ಧಾರವಾಡ ಜಿಲ್ಲಾ ನ್ಯಾಯಾಲಯದ ಆಡಳಿತ ಕಚೇರಿಗೆ ಬಂದಿತ್ತು. ಮಧ್ಯಾಹ್ನ 2 ಗಂಟೆಗೆ ನ್ಯಾಯಾಲಯದಲ್ಲಿ 23 ಸೈನೈಡ್ ಅನಿಲ ಗುಂಡುಗಳು ಸ್ಫೋಟಗೊಳ್ಳಲಿವೆ ಎಂದು ಇ-ಮೇಲ್‌ನಲ್ಲಿ ಉಲ್ಲೇಖಿಸಲಾಗಿತ್ತು.

ಈ ಬೆದರಿಕೆ ಸಂದೇಶದಿಂದ ನ್ಯಾಯಾಲಯದ ಸುತ್ತಮುತ್ತ ಆತಂಕದ ವಾತಾವರಣ ಉಂಟಾಗಿದ್ದು, ಸ್ಥಳಕ್ಕೆ ಆಗಮಿಸಿದ್ದ ಬಾಂಬ್ ನಿಷ್ಕ್ರಿಯ ದಳ ಪರಿಶೀಲನೆ ನಡೆಸಿತ್ತು. ಸದ್ಯ ಮತ್ತೊಮ್ಮೆ ಬಂದಿರುವ ಬೆದರಿಕೆ ಸಂದೇಶದ ಹಿನ್ನೆಲೆ ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಇ-ಮೇಲ್ ಕಳುಹಿಸಿದವರ ಪತ್ತೆಗೆ ಮುಂದಾಗಿದ್ದಾರೆ.

ರಾಜ್ಯದೊಂದಿಗೆ ಚರ್ಚಿಸದೇ NCERT ಪುಸ್ತಕ ಬಿಡುಗಡೆ: 6ನೇ ತರಗತಿ ಕನ್ನಡ ಪಠ್ಯಕ್ಕೆ ಮಧು ಬಂಗಾರಪ್ಪ ಆಕ್ಷೇಪ

ಬೆಂಗಳೂರು: 6ನೇ ತರಗತಿಗಾಗಿ ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಬಿಡುಗಡೆ ಮಾಡಿರುವ ಕನ್ನಡ ಪಠ್ಯಪುಸ್ತಕಕ್ಕೆ ಮಾಜಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ರಾಜ್ಯ ಸರ್ಕಾರ ಅಥವಾ ಸಂಬಂಧಿತ ಶಿಕ್ಷಣ ತಜ್ಞರೊಂದಿಗೆ ಸಮಾಲೋಚನೆ ನಡೆಸದೇ ಪುಸ್ತಕ ಪ್ರಕಟಿಸಲಾಗಿದೆ ಎಂದುಆರೋಪಿಸಿದ್ದಾರೆ.

‘ಕೃಷ್ಣ’ ಎಂಬ ಹೆಸರಿನ ಈ ಪಠ್ಯಪುಸ್ತಕದಲ್ಲಿ ಕನ್ನಡದ ವೈಚಾರಿಕ ಪರಂಪರೆ, ಪ್ರಾದೇಶಿಕ ಸಂಸ್ಕೃತಿ ಹಾಗೂ ಸ್ಥಳೀಯ ಜೀವನಶೈಲಿಗೆ ಅಗತ್ಯವಾದ ಪ್ರಾಮುಖ್ಯತೆ ನೀಡಿಲ್ಲ ಎಂದು ಮಧು ಬಂಗಾರಪ್ಪ ಹೇಳಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕರಾವಳಿ ಕರ್ನಾಟಕ, ಉತ್ತರ ಕರ್ನಾಟಕ, ಮಲೆನಾಡು ಹಾಗೂ ಹಳೆ ಮೈಸೂರು ಭಾಗಗಳ ಜಾನಪದ ಪರಂಪರೆ, ಸಾಹಿತ್ಯ, ಸಂಸ್ಕೃತಿ ಮತ್ತು ಜೀವನ ಪದ್ಧತಿಯನ್ನು ಪುಸ್ತಕದಲ್ಲಿ ಸಮರ್ಪಕವಾಗಿ ಪ್ರತಿಬಿಂಬಿಸಲಾಗಿಲ್ಲ ಎಂದು ಆರೋಪಿಸಿದರು.

ಪಠ್ಯದಲ್ಲಿರುವ ಸಮತೋಲನ ಆಹಾರದ ಕುರಿತ ಪಾಠದಲ್ಲಿಯೂ ಮೊಟ್ಟೆ, ಮೀನು ಹಾಗೂ ಮಾಂಸಾಹಾರದ ಉಲ್ಲೇಖವಿಲ್ಲದೆ ಕೇವಲ ಸಸ್ಯಾಹಾರಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಇದು ಸಮತೋಲಿತ ಮತ್ತು ಸಮಗ್ರ ನಿರೂಪಣೆಯಲ್ಲ ಎಂದು ಅವರು ಅಭಿಪ್ರಾಯಪಟ್ಟರು.

“ನಾನು ಹಿಂದೂ ಧರ್ಮದಲ್ಲಿ ಹುಟ್ಟಿದವನು. ಶ್ರೀಕೃಷ್ಣನ ಬಗ್ಗೆ ನನಗೆ ಯಾವುದೇ ವಿರೋಧವಿಲ್ಲ. ಆದರೆ ಶಿಕ್ಷಣ ಮತ್ತು ಧರ್ಮವನ್ನು ಬೆರೆಸಿ ಮಕ್ಕಳಿಗೆ ಪಾಠ ಮಾಡುವುದು ಸೂಕ್ತವಲ್ಲ. ಶಿಕ್ಷಣ ವ್ಯವಸ್ಥೆಯಲ್ಲಿ ಸಮಾನತೆ ಮತ್ತು ವೈವಿಧ್ಯತೆ ಪ್ರತಿಬಿಂಬಿಸಬೇಕು” ಎಂದು ಮಧು ಬಂಗಾರಪ್ಪ ಹೇಳಿದರು.

ರಾಜ್ಯದ ಪಠ್ಯಕ್ರಮ ಅಭಿವೃದ್ಧಿ ಸಂಸ್ಥೆ (ಡಿಎಸ್‌ಇಆರ್‌ಟಿ) ಈಗಾಗಲೇ ‘ಸವಿ ಕನ್ನಡ’, ‘ಸಿರಿ ಕನ್ನಡ’ ಮತ್ತು ‘ತಿಳಿ ಕನ್ನಡ’ ಸೇರಿದಂತೆ ಹಲವು ಪಠ್ಯಪುಸ್ತಕಗಳನ್ನು ಸಿದ್ಧಪಡಿಸಿದೆ. ಇಂತಹ ಪುಸ್ತಕಗಳನ್ನು ಪರಿಗಣಿಸದೇ ಹೊಸ ಪಠ್ಯವನ್ನು ಜಾರಿಗೆ ತರಲು ಮುಂದಾಗಿರುವುದು ಕನ್ನಡದ ಅಸ್ಮಿತೆಗೆ ಧಕ್ಕೆಯಾಗಿದೆ ಎಂದು ಅವರು ಆರೋಪಿಸಿದರು.

ಕರ್ನಾಟಕದ ಸಂಸ್ಕೃತಿ, ಆಚಾರ-ವಿಚಾರ, ಸಾಹಿತ್ಯ ಪರಂಪರೆ ಹಾಗೂ ಸ್ಥಳೀಯ ಜೀವನ ಮೌಲ್ಯಗಳನ್ನು ಒಳಗೊಂಡ ಹೊಸ ಪಠ್ಯಪುಸ್ತಕವನ್ನು ಸಿದ್ಧಪಡಿಸಬೇಕು. ಪ್ರಸ್ತುತ ಬಿಡುಗಡೆಯಾಗಿರುವ ಪುಸ್ತಕವನ್ನು ಕೂಡಲೇ ಹಿಂಪಡೆಯಬೇಕು ಎಂದು ಅವರು ಒತ್ತಾಯಿಸಿದರು.

ಈ ವಿಚಾರವನ್ನು ಮುಖ್ಯಮಂತ್ರಿ ಅವರ ಗಮನಕ್ಕೆ ತಂದು, ಕೇಂದ್ರ ಸರ್ಕಾರಕ್ಕೆ ಅಧಿಕೃತವಾಗಿ ಪತ್ರ ಬರೆಯುವಂತೆ ಮನವಿ ಮಾಡುವುದಾಗಿ ತಿಳಿಸಿದ ಮಧು ಬಂಗಾರಪ್ಪ, ಅಗತ್ಯವಿದ್ದರೆ ಈ ವಿಷಯವನ್ನು ಹೋರಾಟದ ರೂಪದಲ್ಲೂ ಮುಂದುವರಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಇದೇ ವೇಳೆ, ಪಠ್ಯಪುಸ್ತಕ ರಚನಾ ಸಮಿತಿಯಲ್ಲಿ ಕೆಲವು ಖಾಸಗಿ ಶಾಲೆ ಮತ್ತು ಕಾಲೇಜುಗಳ ಪ್ರತಿನಿಧಿಗಳನ್ನು ಸೇರಿಸಿರುವುದಕ್ಕೂ ಅವರು ಆಕ್ಷೇಪ ವ್ಯಕ್ತಪಡಿಸಿದ್ದು, ಪಠ್ಯ ರಚನಾ ಪ್ರಕ್ರಿಯೆಯಲ್ಲಿ ಹೆಚ್ಚಿನ ಪಾರದರ್ಶಕತೆ ಮತ್ತು ರಾಜ್ಯದ ಪ್ರತಿನಿಧಿತ್ವ ಇರಬೇಕೆಂದು ಆಗ್ರಹಿಸಿದರು.

1975ರ ತುರ್ತು ಪರಿಸ್ಥಿತಿ ಈಗ ಶಾಲಾ ಪಠ್ಯದಲ್ಲಿ: ಮೊದಲ ಬಾರಿಗೆ 9ನೇ ತರಗತಿ NCERT ಪುಸ್ತಕದಲ್ಲಿ ಸೇರ್ಪಡೆ

0

ನವದೆಹಲಿ: ದೇಶದ ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಬದಲಾವಣೆಯೊಂದನ್ನು ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಜಾರಿಗೊಳಿಸಿದ್ದು, 1975ರ ರಾಷ್ಟ್ರೀಯ ತುರ್ತು ಪರಿಸ್ಥಿತಿ (ಎಮರ್ಜೆನ್ಸಿ) ಕುರಿತ ಪ್ರತ್ಯೇಕ ಅಧ್ಯಾಯವನ್ನು ಮೊದಲ ಬಾರಿಗೆ 9ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಸೇರ್ಪಡೆಗೊಳಿಸಿದೆ.

ಹೊಸ ರಾಷ್ಟ್ರೀಯ ಶಿಕ್ಷಣ ನೀತಿ (NEP) ಅನ್ವಯ ಪರಿಷ್ಕರಿಸಲಾದ ಪಠ್ಯಪುಸ್ತಕಗಳನ್ನು ದೇಶಾದ್ಯಂತ ಜಾರಿಗೆ ತರಲಾಗುತ್ತಿದ್ದು, 2026-27ನೇ ಶೈಕ್ಷಣಿಕ ವರ್ಷದಿಂದ ವಿದ್ಯಾರ್ಥಿಗಳು ಹೊಸ ಪಠ್ಯಕ್ರಮದ ಅಧ್ಯಯನ ಆರಂಭಿಸಲಿದ್ದಾರೆ.

ಹೊಸ ಸಮಾಜ ವಿಜ್ಞಾನ ಪಠ್ಯದಲ್ಲಿನ ‘ಪ್ರಜಾಪ್ರಭುತ್ವ ರಾಜಕೀಯ-1’ ಪುಸ್ತಕದ 5ನೇ ಅಧ್ಯಾಯದಲ್ಲಿ 1975ರ ತುರ್ತು ಪರಿಸ್ಥಿತಿಯನ್ನು “ಪ್ರಜಾಪ್ರಭುತ್ವಕ್ಕೆ ಎದುರಾದ ಸವಾಲು” ಎಂದು ವಿವರಿಸಲಾಗಿದೆ. ಅಂದಿನ ಪ್ರಧಾನಿ ಇಂದಿರಾ ಗಾಂಧಿ ನೇತೃತ್ವದ ಸರ್ಕಾರ ಜಾರಿಗೊಳಿಸಿದ್ದ 21 ತಿಂಗಳ ತುರ್ತು ಪರಿಸ್ಥಿತಿಯ ಅವಧಿಯಲ್ಲಿ ನಾಗರಿಕರ ಮೂಲಭೂತ ಹಕ್ಕುಗಳು ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲೆ ಬಿದ್ದ ಪರಿಣಾಮಗಳನ್ನು ವಿದ್ಯಾರ್ಥಿಗಳಿಗೆ ಪರಿಚಯಿಸಲಾಗಿದೆ.

ಅಧ್ಯಾಯದಲ್ಲಿ ಮಾಧ್ಯಮಗಳ ಮೇಲೆ ಹೇರಲಾಗಿದ್ದ ಸೆನ್ಸಾರ್ ವ್ಯವಸ್ಥೆ, ಪತ್ರಿಕಾ ಸ್ವಾತಂತ್ರ್ಯದ ಮೇಲಿನ ನಿರ್ಬಂಧಗಳು, ವಿರೋಧ ಪಕ್ಷದ ನಾಯಕರ ಬಂಧನಗಳು ಹಾಗೂ ಆ ಅವಧಿಯಲ್ಲಿ ನಡೆದ ಪ್ರಮುಖ ರಾಜಕೀಯ ಬೆಳವಣಿಗೆಗಳ ಬಗ್ಗೆ ವಿವರಿಸಲಾಗಿದೆ. ಜೊತೆಗೆ ಕಾರ್ಯಾಂಗ ಮತ್ತು ನ್ಯಾಯಾಂಗದ ನಡುವಿನ ಸಂಘರ್ಷಗಳು ಹಾಗೂ ಅಧಿಕಾರದ ದುರ್ಬಳಕೆಯ ಆರೋಪಗಳ ಕುರಿತ ಉಲ್ಲೇಖಗಳನ್ನೂ ಸೇರಿಸಲಾಗಿದೆ.

ಇದುವರೆಗೆ ತುರ್ತು ಪರಿಸ್ಥಿತಿಯ ಇತಿಹಾಸ ಮತ್ತು ಅದರ ರಾಜಕೀಯ ಪರಿಣಾಮಗಳ ಕುರಿತು ಪಾಠಗಳು ಮುಖ್ಯವಾಗಿ 12ನೇ ತರಗತಿಯ ರಾಜಕೀಯ ವಿಜ್ಞಾನ ವಿಷಯದಲ್ಲಷ್ಟೇ ಒಳಗೊಂಡಿದ್ದವು. ಆದರೆ ಪ್ರಜಾಪ್ರಭುತ್ವದ ಮೌಲ್ಯಗಳು, ಸಂವಿಧಾನದ ಮಹತ್ವ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆಗೆ ಎದುರಾಗಬಹುದಾದ ಸವಾಲುಗಳ ಬಗ್ಗೆ ವಿದ್ಯಾರ್ಥಿಗಳಿಗೆ ಹೈಸ್ಕೂಲ್ ಹಂತದಲ್ಲಿಯೇ ಅರಿವು ಮೂಡಿಸುವ ಉದ್ದೇಶದಿಂದ ಈ ಅಧ್ಯಾಯವನ್ನು 9ನೇ ತರಗತಿಗೆ ಸೇರಿಸಲಾಗಿದೆ ಎಂದು ತಿಳಿಸಲಾಗಿದೆ.

ಆದರೆ ಎನ್‌ಸಿಇಆರ್‌ಟಿ ಈ ನಿರ್ಧಾರ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ಕಾಂಗ್ರೆಸ್ ಸೇರಿದಂತೆ ಕೆಲವು ವಿರೋಧ ಪಕ್ಷಗಳು ಈ ಕ್ರಮವನ್ನು ಟೀಕಿಸಿದ್ದು, ಶಿಕ್ಷಣ ಸಂಸ್ಥೆಗಳನ್ನು ರಾಜಕೀಯ ಉದ್ದೇಶಗಳಿಗೆ ಬಳಸಿಕೊಳ್ಳಲಾಗುತ್ತಿದೆ ಎಂದು ಆರೋಪಿಸಿವೆ. ಕಾಂಗ್ರೆಸ್ ಇತಿಹಾಸವನ್ನು ನಕಾರಾತ್ಮಕವಾಗಿ ಬಿಂಬಿಸಲು ಹಾಗೂ ನಿರ್ದಿಷ್ಟ ರಾಜಕೀಯ ದೃಷ್ಟಿಕೋನವನ್ನು ವಿದ್ಯಾರ್ಥಿಗಳ ಮೇಲೆ ಹೇರಲು ಪ್ರಯತ್ನಿಸಲಾಗುತ್ತಿದೆ ಎಂದು ವಿರೋಧ ಪಕ್ಷಗಳು ಆಕ್ಷೇಪ ವ್ಯಕ್ತಪಡಿಸಿವೆ.

ಇದಕ್ಕೆ ಪ್ರತಿಯಾಗಿ, ಪ್ರಜಾಪ್ರಭುತ್ವದ ಇತಿಹಾಸದಲ್ಲಿನ ಮಹತ್ವದ ಘಟನೆಗಳ ಬಗ್ಗೆ ವಿದ್ಯಾರ್ಥಿಗಳಿಗೆ ಸಮಗ್ರ ಮಾಹಿತಿ ನೀಡುವುದು ಶಿಕ್ಷಣದ ಭಾಗವಾಗಿದ್ದು, ಇತಿಹಾಸದ ವಿವಿಧ ಆಯಾಮಗಳನ್ನು ತಿಳಿಸುವ ಉದ್ದೇಶದಿಂದಲೇ ಈ ಅಧ್ಯಾಯವನ್ನು ಸೇರಿಸಲಾಗಿದೆ ಎಂಬ ಅಭಿಪ್ರಾಯಗಳು ಕೂಡ ವ್ಯಕ್ತವಾಗುತ್ತಿವೆ.

ಫೋಟೋ ತೆಗೆಯಲು ಹೋಗಿ ಒಂದೇ ಕುಟುಂಬದ ಐವರು ದುರ್ಮರಣ: ಸರ್ಕಾರದಿಂದ ಪರಿಹಾರ ನೀಡುವಂತೆ ಒತ್ತಾಯ

0

ಮಂಡ್ಯ: ಕಾವೇರಿ ನದಿ ತೀರದ ಮುತ್ತತ್ತಿಯಲ್ಲಿ ಸಂಭವಿಸಿದ ಭೀಕರ ದುರಂತದಲ್ಲಿ ಒಂದೇ ಕುಟುಂಬದ ಐವರು ಜಲಸಮಾಧಿಯಾಗಿರುವ ಪ್ರಕರಣ ತೀವ್ರ ಚರ್ಚೆಗೆ ಕಾರಣವಾಗಿದೆ. ಫೋಟೋ ತೆಗೆದುಕೊಳ್ಳುವ ಉದ್ದೇಶದಿಂದ ನದಿಗೆ ಇಳಿದಿದ್ದ ವೇಳೆ ಸಂಭವಿಸಿದ ಘಟನೆ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಬುಧವಾರ ಸಂಜೆ ನಡೆದ ಘಟನೆಯ ನಂತರ ಶೋಧ ಕಾರ್ಯಾಚರಣೆಯಲ್ಲಿ ಐವರ ಮೃತದೇಹಗಳನ್ನು ಪತ್ತೆಹಚ್ಚಲಾಗಿದ್ದು, ಗುರುವಾರ ಮಿಮ್ಸ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಯಿತು. ಮೃತರನ್ನು ಚೈತ್ರಾ, ಶ್ವೇತಾ, ವಿಜಯಮ್ಮ, ಪ್ರಿಯಾಂಕಾ ಹಾಗೂ ಮಹೇಶ್ ಎಂದು ಗುರುತಿಸಲಾಗಿದೆ.

ಘಟನೆ ನಂತರ ಆಸ್ಪತ್ರೆಯ ಶವಗಾರದಲ್ಲಿ ಕುಟುಂಬಸ್ಥರ ಆಕ್ರಂದನ ದೃಶ್ಯಗಳು ಮನಕಲಕುವಂತಾಗಿದ್ದವು. ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬ ಸದಸ್ಯರು ಭಾವುಕರಾಗಿ ದುಃಖ ವ್ಯಕ್ತಪಡಿಸಿದರು.

ಪಾರಾದ ರವಿ ನೀಡಿದ ಪ್ರಾಥಮಿಕ ಮಾಹಿತಿಯ ಪ್ರಕಾರ, ಕುಟುಂಬವು ಮುತ್ತತ್ತಿಗೆ ಭೇಟಿ ನೀಡಿದ್ದು ಫೋಟೋ ಸೆಷನ್ ವೇಳೆ ವಿಜಯಮ್ಮ ಕಾಲು ಜಾರಿ ನೀರಿಗೆ ಬಿದ್ದಿದ್ದಾರೆ. ಅವರನ್ನು ರಕ್ಷಿಸಲು ಪ್ರಯತ್ನಿಸಿದ ಇತರರು ಸಹ ನದಿಯ ಹರಿವಿಗೆ ಸಿಲುಕಿ ಸಾವನ್ನಪ್ಪಿದ್ದಾರೆ.

ಈ ಪ್ರದೇಶದಲ್ಲಿ ಸುರಕ್ಷತಾ ಸೂಚನೆ ಫಲಕಗಳ ಕೊರತೆ ಹಾಗೂ ಜೀವ ರಕ್ಷಕ ಸಿಬ್ಬಂದಿಯಿಲ್ಲದಿರುವ ಬಗ್ಗೆ ಸ್ಥಳೀಯರು ಗಂಭೀರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಪ್ರವಾಸಿ ಹಾಗೂ ಧಾರ್ಮಿಕ ಸ್ಥಳವಾಗಿರುವ ಮುತ್ತತ್ತಿಯಲ್ಲಿ ಮೂಲಭೂತ ಸುರಕ್ಷತಾ ವ್ಯವಸ್ಥೆಗಳ ಕೊರತೆ ಮತ್ತೊಮ್ಮೆ ಬೆಳಕಿಗೆ ಬಂದಿದೆ.

ಜಿಲ್ಲಾಧಿಕಾರಿ ಡಾ. ಕುಮಾರ್ ಅವರು ಸ್ಥಳ ಪರಿಶೀಲನೆ ನಡೆಸಿ, ಘಟನೆಯನ್ನು ಅಚಾತುರ್ಯ ಎಂದು ವರ್ಗೀಕರಿಸಿದ್ದು, ಮುಂದಿನ ಕ್ರಮಕ್ಕಾಗಿ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು ಎಂದು ತಿಳಿಸಿದ್ದಾರೆ.

ಕೃಷಿ ತಾಪಂಡ ನಿವಾಸದಲ್ಲಿ ನೇಣಿಗೆ ಶರಣಾದ ಗೆಳೆಯ ವೈಶಾಖ್: ತನಿಖೆ ಆರಂಭಿಸಿದ ಪೊಲೀಸರು

ಬೆಂಗಳೂರು: ಕನ್ನಡ ಚಿತ್ರರಂಗದ ನಟಿ ಕೃಷಿ ತಾಪಂಡ ಅವರ ನಿವಾಸದಲ್ಲಿ ಆತ್ಮಹತ್ಯೆ ಘಟನೆ ಬೆಳಕಿಗೆ ಬಂದಿದ್ದು, ಅವರ ಆಪ್ತ ಗೆಳೆಯ ಹಾಗೂ ಉದ್ಯಮಿ ವೈಶಾಕ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ರಾಜರಾಜೇಶ್ವರಿ ನಗರ (ಆರ್‌ಆರ್ ನಗರ) ವ್ಯಾಪ್ತಿಯಲ್ಲಿರುವ ನಟಿಯ ಮನೆಯಲ್ಲಿ ಈ ಘಟನೆ ನಡೆದಿದ್ದು, ಮನೆಯಲ್ಲಿ ಯಾರೂ ಇಲ್ಲದ ವೇಳೆ ವೈಶಾಕ್ ಆತ್ಮಹತ್ಯೆಗೆ ಶರಣಾಗಿರುವುದಾಗಿ ಪ್ರಾಥಮಿಕ ಮಾಹಿತಿ ತಿಳಿಸಿದೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಆರ್‌ಆರ್ ನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ.

ವೈಶಾಕ್ ಆತ್ಮಹತ್ಯೆಗೆ ನಿಖರ ಕಾರಣವೇನು ಎಂಬುದು ಇನ್ನೂ ತಿಳಿದುಬಂದಿಲ್ಲ. ಘಟನಾ ಸ್ಥಳದಲ್ಲಿ ಯಾವುದೇ ಡೆತ್‌ನೋಟ್ ಪತ್ತೆಯಾಗಿದೆಯೇ ಎಂಬ ಕುರಿತು ಪೊಲೀಸರು ಮಾಹಿತಿ ಬಹಿರಂಗಪಡಿಸಿಲ್ಲ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ಮುಂದುವರಿಸಿದ್ದಾರೆ.

error: Content is protected !!