ದಾವಣಗೆರೆ: ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಬಾಗಳಿಯ ಶ್ರೀ ಕಲ್ಲೇಶ್ವರ ದೇಗುಲದ ಬಳಿ ಸಂಭವಿಸಿದ ದುರಂತದಲ್ಲಿ 10 ವರ್ಷದ ಬಾಲಕ ಪುರಾತನ ಬಾವಿಗೆ ಬಿದ್ದು ಮೃತಪಟ್ಟಿದ್ದಾನೆ. ಕುಟುಂಬದೊಂದಿಗೆ ಪ್ರವಾಸಕ್ಕೆ ತೆರಳಿದ್ದ ವೇಳೆ ಕಾಲು ಜಾರಿ ಬಾವಿಗೆ ಬಿದ್ದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.
ಮೃತ ಬಾಲಕನನ್ನು ಹರಪನಹಳ್ಳಿಯ ಗಾಜಿನಕೇರಿ ನಿವಾಸಿಗಳಾದ ವಿನೋದ್–ವಿದ್ಯಾ ದಂಪತಿಯ ಪುತ್ರ ವಿಷ್ಣು (10) ಎಂದು ಗುರುತಿಸಲಾಗಿದೆ. ಕುಟುಂಬ ಸದಸ್ಯರು ಮಕ್ಕಳೊಂದಿಗೆ ದೇವಾಲಯಕ್ಕೆ ಪ್ರವಾಸಕ್ಕೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಪುರಾತನ ಬಾವಿಗೆ ಬಿದ್ದಿದ್ದಾನೆ ಎಂದು ತಿಳಿದುಬಂದಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಹರಪನಹಳ್ಳಿ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆ ನಡೆಸಿ ಬಾಲಕನ ಮೃತದೇಹವನ್ನು ಹೊರತೆಗೆದರು.
ಘಟನೆಗೆ ಸಂಬಂಧಿಸಿದಂತೆ ಹರಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ. ಪುತ್ರನನ್ನು ಕಳೆದುಕೊಂಡ ತಂದೆ-ತಾಯಿಯರ ಆಕ್ರಂದನ ಸ್ಥಳದಲ್ಲಿದ್ದವರ ಮನಕಲಕುವಂತಿತ್ತು.

