ವಿಜಯಸಾಕ್ಷಿ ಸುದ್ದಿ, ಹಗರಿಬೊಮ್ಮನಹಳ್ಳಿ: ವಿದ್ಯಾರ್ಥಿಗಳು ಜೀವನದಲ್ಲಿ ಉನ್ನತ ಗುರಿಯನ್ನು ಹೊಂದಿ ಕಠಿಣ ಪರಿಶ್ರಮ ಹಾಗೂ ನಿರಂತರ ಅಧ್ಯಯನದ ಮೂಲಕ ಯಶಸ್ಸಿನ ಶಿಖರ ತಲುಪಬೇಕು ಎಂದು ಮಾಜಿ ಶಾಸಕ ನಂದಿಹಳ್ಳಿ ಹಾಲಪ್ಪ ಕರೆ ನೀಡಿದರು.
ಪಟ್ಟಣದ ಹರಹರ ದೇವಸ್ಥಾನದಲ್ಲಿ ಚಾಣಕ್ಯ ಕರಿಯರ್ ಅಕಾಡೆಮಿ ಹಾಗೂ ಶಾಸಕ ಕೆ. ನೇಮರಾಜ ನಾಯ್ಕ ಅವರ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಸ್ಪರ್ಧಾತ್ಮಕ ಪರೀಕ್ಷೆಗಳ 10 ದಿನಗಳ ಉಚಿತ ತರಬೇತಿ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.
ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಸರ್ಕಾರಿ ಉದ್ಯೋಗ ಪಡೆಯಲು ನಿರಂತರ ಶ್ರಮ ಮತ್ತು ಗುರಿ ಸ್ಪಷ್ಟವಾಗಿರಬೇಕು. ದೊಡ್ಡ ಕನಸು ಕಂಡು ಅದನ್ನು ಸಾಕಾರಗೊಳಿಸಲು ವಿದ್ಯಾರ್ಥಿಗಳು ಶ್ರಮಿಸಬೇಕು ಎಂದು ಸಲಹೆ ನೀಡಿದರು.
ಅಕಾಡೆಮಿ ಮುಖ್ಯಸ್ಥ ಪ್ರದೀಪ್ ಗುಡ್ಡದ ಪ್ರಾಸ್ತಾವಿಕವಾಗಿ ಮಾತನಾಡಿ, 2017ರಲ್ಲಿ ಆರಂಭವಾದ ಚಾಣಕ್ಯ ಕರಿಯರ್ ಅಕಾಡೆಮಿಯಲ್ಲಿ ಇದುವರೆಗೆ 6 ಸಾವಿರಕ್ಕೂ ಹೆಚ್ಚು ಅಭ್ಯರ್ಥಿಗಳು ತರಬೇತಿ ಪಡೆದು ವಿವಿಧ ಸರ್ಕಾರಿ ಹುದ್ದೆಗಳನ್ನು ಅಲಂಕರಿಸಿದ್ದಾರೆ. ಐಎಎಸ್, ಐಪಿಎಸ್, ಕೆಎಎಸ್, ಕೆಪಿಎಸ್ ಹಾಗೂ ಪಿಎಸ್ಐ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ತರಬೇತಿ ನೀಡಲಾಗುತ್ತಿದೆ ಎಂದರು. ತರಬೇತಿ ಪಡೆಯುವ ಅಭ್ಯರ್ಥಿಗಳಿಗೆ ಉಚಿತ ಊಟ ಮತ್ತು ವಸತಿ ವ್ಯವಸ್ಥೆ ಕಲ್ಪಿಸಿರುವ ಶಾಸಕ ಕೆ. ನೇಮರಾಜ ನಾಯ್ಕ ಹಾಗೂ ಹರಹರ ದೇವಸ್ಥಾನ ಸಮಿತಿಯನ್ನು ಅಭಿನಂದಿಸಿದರು.
ಹರಹರ ದೇವಸ್ಥಾನ ಸಮಿತಿ ಅಧ್ಯಕ್ಷ ಅಕ್ಕಿಶಿವಣ್ಣ ಮಾತನಾಡಿ, ಏಕಾಗ್ರತೆ ಮತ್ತು ನಿರಂತರ ಪರಿಶ್ರಮದಿಂದ ಮಾತ್ರ ಯಶಸ್ಸು ಸಾಧ್ಯ ಎಂದರು.
ನಂದೀಪುರ ಸುಕ್ಷೇತ್ರದ ಡಾ. ಮಹೇಶ್ವರ ಸ್ವಾಮೀಜಿ ಆಶೀರ್ವಚನ ನೀಡಿದರು. ಹಾಲಸ್ವಾಮಿ ಮಠದ ಹಾಲಸಿದ್ದೇಶ್ವರ ಸ್ವಾಮೀಜಿ, ನವಲಿ ಮಠದ ರುದ್ರಮುನಿ ಸ್ವಾಮೀಜಿ ಹಾಗೂ ಕಡಲಬಾಳು ಗವಿಮಠದ ಮರಿ ಶಾಂತವೀರ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು.
ಕಾರ್ಯಕ್ರಮದಲ್ಲಿ ದೇವಿಪ್ರಸಾದ್, ಕಿನ್ನಾಳ್ ಸುಭಾಷ್, ನಿವೃತ್ತ ಕಾರ್ಯನಿರ್ವಾಹಕ ಅಧಿಕಾರಿ ಟಿ. ವೆಂಕೋಬಪ್ಪ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಗವಿಸಿದ್ದೇಶ ಕಾರ್ಯಕ್ರಮ ನಿರೂಪಿಸಿದರು. ಶಿಬಿರದಲ್ಲಿ 1,000ಕ್ಕೂ ಹೆಚ್ಚು ಪ್ರಶಿಕ್ಷಣಾರ್ಥಿಗಳು ಭಾಗವಹಿಸಿದ್ದರು.

