ಬೆಂಗಳೂರು: ತಮ್ಮ ಹಾಗೂ ಕುಟುಂಬದ ವಿರುದ್ಧ ಪೋಸ್ಟರ್ ಅಂಟಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಹಾಗೂ ಜೆಡಿಎಸ್ ನಾಯಕ ಹೆಚ್.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಮುಖ್ಯಮಂತ್ರಿ ಹುದ್ದೆಗೆ ಏರಿದ ಬಳಿಕವಾದರೂ ಇಂತಹ ರಾಜಕೀಯ ಪ್ರಚಾರಗಳನ್ನು ನಿಲ್ಲಿಸುತ್ತಾರೆ ಎಂದು ನಿರೀಕ್ಷಿಸಿದ್ದೆ, ಆದರೆ ಆ ಮನೋಭಾವ ಇನ್ನೂ ಬದಲಾಗಿಲ್ಲ ಎಂದು ಟೀಕಿಸಿದರು.
ಬಿಡದಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಕುಮಾರಸ್ವಾಮಿ, ತಮ್ಮ ಹಾಗೂ ಕುಟುಂಬ ಸದಸ್ಯರ ಭಾವಚಿತ್ರಗಳನ್ನು ಬಳಸಿಕೊಂಡು ಜಮೀನು ವಿಚಾರವಾಗಿ ಪೋಸ್ಟರ್ಗಳನ್ನು ಅಂಟಿಸಲಾಗಿದೆ ಎಂದು ಆಕ್ಷೇಪಿಸಿದರು.
“ನನ್ನದು ಮಾತ್ರವಲ್ಲ, ನನ್ನ ಪತ್ನಿಯ ಫೋಟೋವನ್ನೂ ಪೋಸ್ಟರ್ಗಳಲ್ಲಿ ಬಳಸಿದ್ದಾರೆ. 100 ಎಕರೆ ಜಮೀನು ಹೊಂದಿದ್ದೇವೆ ಎಂದು ಪ್ರಚಾರ ಮಾಡಲಾಗುತ್ತಿದೆ. ವಾಸ್ತವವಾಗಿ ಸುಮಾರು 40 ವರ್ಷಗಳ ಹಿಂದೆ 46 ಎಕರೆ ಜಮೀನನ್ನು ಕಾನೂನುಬದ್ಧವಾಗಿ ಖರೀದಿಸಲಾಗಿದೆ. ನನ್ನ ಹೆಸರಿನಲ್ಲಿ 100 ಎಕರೆ ಜಮೀನು ಎಲ್ಲಿದೆ ಎಂಬುದನ್ನು ತೋರಿಸಲಿ” ಎಂದು ಸವಾಲು ಹಾಕಿದರು.
ಅನಿತಾ ಕುಮಾರಸ್ವಾಮಿ ಅವರ ಹೆಸರಿನಲ್ಲಿರುವ ಜಮೀನನ್ನೂ ಕಾನೂನುಬದ್ಧವಾಗಿ ಖರೀದಿಸಲಾಗಿದೆ. ಖರೀದಿಸಿರುವ ಆಸ್ತಿಯನ್ನು ತಪ್ಪಾಗಿ ಬಿಂಬಿಸಿ ಪೋಸ್ಟರ್ಗಳ ಮೂಲಕ ಅಪಪ್ರಚಾರ ನಡೆಸುವುದು ಸರಿಯಲ್ಲ ಎಂದು ಅವರು ಹೇಳಿದರು.
ಪೋಸ್ಟರ್ ರಾಜಕಾರಣದ ಮೂಲಕ ಜನರನ್ನು ದಾರಿ ತಪ್ಪಿಸಲು ಸಾಧ್ಯವಿಲ್ಲ. ಮುಖ್ಯಮಂತ್ರಿ ಹುದ್ದೆಯಲ್ಲಿರುವವರು ಒಂದು ಮಟ್ಟದ ರಾಜಕೀಯ ಸಂಸ್ಕೃತಿ ಮತ್ತು ಜವಾಬ್ದಾರಿಯನ್ನು ಪಾಲಿಸಬೇಕು ಎಂದು ಕುಮಾರಸ್ವಾಮಿ ಅಭಿಪ್ರಾಯಪಟ್ಟರು.
“ತಪ್ಪುಗಳಿದ್ದರೆ ಸರ್ಕಾರ ತನಿಖೆ ನಡೆಸಲಿ, ಅಧಿಕಾರಿಗಳಿಗೆ ಕ್ರಮ ಕೈಗೊಳ್ಳುವಂತೆ ಸೂಚಿಸಲಿ. ಅದನ್ನು ಬಿಟ್ಟು ಪೋಸ್ಟರ್ಗಳ ಮೂಲಕ ವೈಯಕ್ತಿಕ ದಾಳಿ ನಡೆಸುವುದು ಸರಿಯಲ್ಲ. ವಿರೋಧ ಪಕ್ಷದ ನಾಯಕರಾದ ಆರ್. ಅಶೋಕ್, ಛಲವಾದಿ ನಾರಾಯಣಸ್ವಾಮಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಿರುದ್ಧವೂ ಇದೇ ರೀತಿಯ ಪೋಸ್ಟರ್ಗಳನ್ನು ಅಂಟಿಸಲಾಗಿದೆ” ಎಂದು ಆರೋಪಿಸಿದರು.
ರಾಜ್ಯದಲ್ಲಿ ರಾಜಕೀಯ ಚರ್ಚೆಗಳು ಮತ್ತು ಆರೋಪ-ಪ್ರತ್ಯಾರೋಪಗಳು ಪ್ರಜಾಪ್ರಭುತ್ವದ ಮೌಲ್ಯಗಳ ವ್ಯಾಪ್ತಿಯಲ್ಲೇ ನಡೆಯಬೇಕು. ಮುಖ್ಯಮಂತ್ರಿ ಹುದ್ದೆಯ ಗೌರವವನ್ನು ಕಾಪಾಡುವ ಜವಾಬ್ದಾರಿ ಎಲ್ಲರ ಮೇಲಿದೆ ಎಂದು ಕುಮಾರಸ್ವಾಮಿ ಹೇಳಿದರು.