ಕೇರಳ: ರಾಜ್ಯಾದ್ಯಂತ ಸುರಿಯುತ್ತಿರುವ ಭಾರೀ ಮಳೆಯಿಂದ ಕೇರಳದಲ್ಲಿ ಭೂಕುಸಿತ ಪ್ರಕರಣಗಳು ಹೆಚ್ಚುತ್ತಿದ್ದು, ಇಡುಕ್ಕಿ ಮತ್ತು ಕೊಟ್ಟಾಯಂ ಜಿಲ್ಲೆಗಳಲ್ಲಿ ಸಂಭವಿಸಿದ ಪ್ರತ್ಯೇಕ ಘಟನೆಗಳಲ್ಲಿ ಮೂವರು ಮೃತಪಟ್ಟಿದ್ದಾರೆ. ಹಲವೆಡೆ ರಕ್ಷಣಾ ಮತ್ತು ಶೋಧ ಕಾರ್ಯಾಚರಣೆ ಮುಂದುವರಿದಿದೆ.
ಇಡುಕ್ಕಿ ಜಿಲ್ಲೆಯ ಕುದಯತ್ತೂರು ಸಮೀಪದ ಅಡೂರ್ಮಾಲ ಪ್ರದೇಶದಲ್ಲಿ ಶನಿವಾರ ಮುಂಜಾನೆ ಭೂಕುಸಿತ ಸಂಭವಿಸಿ ಮನೆ ಕುಸಿದ ಪರಿಣಾಮ ಸುಮತಿ ಎಂಬ ಮಹಿಳೆ ಮೃತಪಟ್ಟಿದ್ದಾರೆ. ಘಟನೆಯ ವೇಳೆ ನೆರೆಹೊರೆಯವರು ಸುಮತಿ ಅವರ ಪತಿ ಮತ್ತು ಮಗನನ್ನು ರಕ್ಷಿಸಿದ್ದು, ಗಾಯಗೊಂಡ ಇಬ್ಬರನ್ನೂ ತೋಡುಪುಳದ ಆಸ್ಪತ್ರೆಗೆ ದಾಖಲಿಸಲಾಗಿದೆ. ಭೂಕುಸಿತದಿಂದ ಮನೆ ಸಂಪೂರ್ಣವಾಗಿ ನೆಲಸಮವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಘಟನೆ ತಿಳಿಯುತ್ತಿದ್ದಂತೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF), ಅಗ್ನಿಶಾಮಕ ಮತ್ತು ರಕ್ಷಣಾ ದಳ, ಪೊಲೀಸ್ ಹಾಗೂ ಕಂದಾಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದರು. ಬಳಿಕ ಅವಶೇಷಗಳಡಿಯಿಂದ ಸುಮತಿ ಅವರ ಮೃತದೇಹವನ್ನು ಹೊರತೆಗೆದರು.
ಇನ್ನೊಂದೆಡೆ, ಕೊಟ್ಟಾಯಂ ಜಿಲ್ಲೆಯ ಪೂಂಜಾರ್ನ ಪಯ್ಯನಿತೋಟಂ ಪ್ರದೇಶದಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಜೋಸೆಫ್ ಎಂಬ ಯುವಕ ಮೃತಪಟ್ಟಿದ್ದಾರೆ. ಅವರ ತಾಯಿ ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ಅವರನ್ನು ಪತ್ತೆಹಚ್ಚಲು ಶೋಧ ಕಾರ್ಯಾಚರಣೆ ಮುಂದುವರಿದಿದೆ.
ಮತ್ತೊಂದು ದುರ್ಘಟನೆಯಲ್ಲಿ ಇಡುಕ್ಕಿ ಜಿಲ್ಲೆಯ ವಾಗಮನ್ ಪ್ರದೇಶದಲ್ಲಿ ಮನೆಯ ಮೇಲೆ ಭೂಕುಸಿತ ಸಂಭವಿಸಿ ಪ್ರಭಾಕರನ್ ನಾಯರ್ ಮೃತಪಟ್ಟಿದ್ದಾರೆ. ಕೊಟ್ಟಾಯಂನ ವೈಕೋಮ್ ಮೂಲದವರಾದ ನಾಯರ್ ಅವರ ಮೃತದೇಹವನ್ನು ಹಲವು ಗಂಟೆಗಳ ಶೋಧ ಕಾರ್ಯದ ಬಳಿಕ ಹೊರತೆಗೆಯಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಭಾರೀ ಮಳೆಯ ಹಿನ್ನೆಲೆಯಲ್ಲಿ ಕೇರಳದ ಹಲವು ಜಿಲ್ಲೆಗಳಲ್ಲಿ ಆಡಳಿತ ಎಚ್ಚರಿಕೆ ವಹಿಸಿದ್ದು, ಭೂಕುಸಿತ ಸಂಭವಿಸುವ ಸಾಧ್ಯತೆ ಇರುವ ಪ್ರದೇಶಗಳ ನಿವಾಸಿಗಳು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚಿಸಲಾಗಿದೆ.

