ಬೆಂಗಳೂರು: ಹುಬ್ಬಳ್ಳಿಯ ಬಿಜೆಪಿ ಕಾರ್ಯಕರ್ತ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿ ಸೇರಿದಂತೆ ಇತರ ಆರೋಪಿಗಳ ಶಿಕ್ಷೆಯ ಪ್ರಮಾಣವನ್ನು ನಾಳೆ ಪ್ರಕಟಿಸಲಾಗುವುದು ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತಿಳಿಸಿದೆ.
ಪ್ರಕರಣದ ಕುರಿತು ದೀರ್ಘಕಾಲ ವಿಚಾರಣೆ ನಡೆಸಿದ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಅವರು, ಎಲ್ಲ ಆರೋಪಿಗಳ ವಾದ-ಪ್ರತಿವಾದಗಳನ್ನು ಆಲಿಸಿ ತೀರ್ಪನ್ನು ನಾಳೆಗೆ ಕಾಯ್ದಿರಿಸಿದ್ದಾರೆ.
ವಿಚಾರಣೆ ವೇಳೆ ಸಿಬಿಐ ಪರ ಸಹಾಯಕ ಸಾಲಿಸೇಟರ್ ಜನರಲ್ ಎಸ್.ವಿ. ರಾಜು ವಾದ ಮಂಡಿಸಿ, ಈ ಅಪರಾಧ ಅತ್ಯಂತ ಗಂಭೀರವಾಗಿದ್ದು ನ್ಯಾಯಾಂಗ ವ್ಯವಸ್ಥೆಗೆ ಧಕ್ಕೆಯಾಗಿದೆ. ಆರೋಪಿಗಳು ಸಾಕ್ಷ್ಯಗಳನ್ನು ನಾಶಪಡಿಸಲು ಯತ್ನಿಸಿದ್ದು, ನ್ಯಾಯ ಪ್ರಕ್ರಿಯೆಗೆ ಅಡ್ಡಿಪಡಿಸಿದ್ದಾರೆ. ಹೀಗಾಗಿ ಎಲ್ಲ ಆರೋಪಿಗಳಿಗೆ ಕಠಿಣ ಜೀವಾವಧಿ ಶಿಕ್ಷೆ ವಿಧಿಸಬೇಕು ಎಂದು ಮನವಿ ಮಾಡಿದರು.
ಇದಕ್ಕೆ ಪ್ರತಿಯಾಗಿ ಆರೋಪಿಗಳ ಪರ ವಕೀಲರು, ಶಿಕ್ಷೆ ಪ್ರಮಾಣವನ್ನು ಕಡಿಮೆಗೊಳಿಸಬೇಕೆಂದು ಕೋರಿದರು. ಆರೋಪಿಗಳಿಗೆ ಕುಟುಂಬದ ಜವಾಬ್ದಾರಿಗಳಿದ್ದು, ಮಾನವೀಯ ದೃಷ್ಟಿಯಿಂದ ಶಿಕ್ಷೆಯಲ್ಲಿ ಸಡಿಲಿಕೆ ನೀಡಬೇಕು ಎಂದು ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದರು.

