ಬೆಂಗಳೂರು: ಡಿಜಿಪಿ ರಾಮಚಂದ್ರರಾವ್ ಅವರ ಅಮಾನತು ಆದೇಶ ಹಿಂಪಡೆಯಲು ಅವರ ಈ ತಿಂಗಳಲ್ಲಿನ ನಿವೃತ್ತಿಯೇ ಪ್ರಮುಖ ಕಾರಣ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಅವರ ಅನುಮತಿ ಪಡೆದು ಡಿಪಿಎಆರ್ ವತಿಯಿಂದ ಅಮಾನತು ಆದೇಶ ಹಿಂಪಡೆಯಲಾಗಿದೆ ಎಂದು ತಿಳಿಸಿದರು.
ಈ ತಿಂಗಳ ಅಂತ್ಯಕ್ಕೆ ರಾಮಚಂದ್ರರಾವ್ ನಿವೃತ್ತಿಯಾಗಲಿದ್ದಾರೆ. ಅದಕ್ಕಾಗಿ ಅಮಾನತು ವಾಪಸ್ ಪಡೆಯಲಾಗಿದೆ. ನಿವೃತ್ತಿಗೆ ಮುನ್ನ ಪಿಂಚಣಿ ಸೇರಿದಂತೆ ಅಗತ್ಯ ಪ್ರಕ್ರಿಯೆಗಳು ಪೂರ್ಣಗೊಳ್ಳಬೇಕಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಿದರು.
ಮುಖ್ಯಮಂತ್ರಿಗಳಿಗೆ ರಾಮಚಂದ್ರರಾವ್ ವಿವರಣೆ ಸಲ್ಲಿಸಿದ್ದು, ತನಿಖೆ ಮುಂದುವರಿಯಲಿ, ಆದರೆ ನಿವೃತ್ತಿಗೆ ಸಂಬಂಧಿಸಿದ ಪಿಂಚಣಿ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲು ಅವಕಾಶ ನೀಡಬೇಕು ಎಂದು ಮನವಿ ಮಾಡಿದ್ದರು ಎಂದು ಪರಮೇಶ್ವರ್ ತಿಳಿಸಿದರು.
ಈ ವಿಚಾರ ನನಗೂ ತಿಳಿದಿತ್ತು. ಆದರೆ ಅಮಾನತು ಹಿಂಪಡೆಯುವುದು ಸರಿಯೋ ತಪ್ಪೋ ಎಂದು ನಾನು ಹೇಳಲು ಸಾಧ್ಯವಿಲ್ಲ. ಇದು ಡಿಪಿಎಆರ್ ಮತ್ತು ಮುಖ್ಯಮಂತ್ರಿಗಳ ವ್ಯಾಪ್ತಿಗೆ ಒಳಪಡುವ ವಿಷಯ. ಅಂತಿಮ ನಿರ್ಧಾರವನ್ನು ಅವರು ಕೈಗೊಂಡಿದ್ದಾರೆ ಎಂದು ಹೇಳಿದರು. ಇದೇ ವೇಳೆ ರಾಮಚಂದ್ರರಾವ್ ವಿರುದ್ಧದ ಆರೋಪಗಳಿಗೆ ಸಂಬಂಧಿಸಿದ ತನಿಖೆ ಮುಂದುವರಿಯಲಿದೆ ಎಂದು ಸ್ಪಷ್ಟಪಡಿಸಿದರು.

