Home Blog

ಶಿಕ್ಷಣವೇ ಜೀವನದ ದೊಡ್ಡ ಸಂಪತ್ತು: ಎ.ಆರ್. ಮಲ್ಲನಗೌಡ್ರ

0

ವಿಜಯಸಾಕ್ಷಿ ಸುದ್ದಿ, ನರೇಗಲ್ಲ: ವಿದ್ಯಾರ್ಥಿಗಳು ಸರ್ಕಾರದ ಶೈಕ್ಷಣಿಕ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಂಡು ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಕಾಲೇಜು ಅಭಿವೃದ್ಧಿ ಮಂಡಳಿ ಉಪಾಧ್ಯಕ್ಷ ಎ.ಆರ್. ಮಲ್ಲನಗೌಡ್ರ ಹೇಳಿದರು.

ಪಟ್ಟಣದ ಸರ್ಕಾರಿ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಆಯೋಜಿಸಿದ್ದ ಉಚಿತ ಪಠ್ಯಪುಸ್ತಕ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಗ್ರಾಮೀಣ ಭಾಗದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಆರ್ಥಿಕ ತೊಂದರೆಯಾಗದಂತೆ ಸರ್ಕಾರ ಹಲವು ಸೌಲಭ್ಯಗಳನ್ನು ನೀಡುತ್ತಿದ್ದು, ಅವುಗಳನ್ನು ಸದ್ಬಳಕೆ ಮಾಡಿಕೊಂಡು ಉನ್ನತ ಶಿಕ್ಷಣ ಪಡೆದು ಸಮಾಜಕ್ಕೆ ಕೊಡುಗೆ ನೀಡಬೇಕು ಎಂದು ಕರೆ ನೀಡಿದರು.

ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ಬಸವರಾಜ ಪಲ್ಲೇದ ಮಾತನಾಡಿ, ಪಠ್ಯಪುಸ್ತಕಗಳು ಜ್ಞಾನ ಮತ್ತು ಮೌಲ್ಯಗಳ ಭಂಡಾರವಾಗಿದ್ದು, ಶಿಸ್ತು, ನಿರಂತರ ಅಧ್ಯಯನ ಹಾಗೂ ಕಠಿಣ ಪರಿಶ್ರಮದಿಂದ ಮಾತ್ರ ಗುರಿ ಸಾಧನೆ ಸಾಧ್ಯ ಎಂದರು.

ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಎಸ್.ಸಿ. ಗುಳಗಣ್ಣವರ ಮಾತನಾಡಿ, ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಪೋಷಕರ ಸಹಕಾರವೂ ಅಗತ್ಯ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಗಣ್ಯರು ವಿದ್ಯಾರ್ಥಿಗಳಿಗೆ ಸಾಂಕೇತಿಕವಾಗಿ ಉಚಿತ ಪಠ್ಯಪುಸ್ತಕಗಳನ್ನು ವಿತರಿಸಿದರು. ದಾದಾಪೀರ ನದಾಫ, ಅನ್ನಪೂರ್ಣ ಸಂಕನಗೌಡ್ರ, ರಾಚಯ್ಯ ರೇಣುಕಮಠ, ವಿದ್ಯಾ ಜಕ್ಕಲಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

“ಸರ್ಕಾರದ ಶೈಕ್ಷಣಿಕ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಂಡು ವಿದ್ಯಾರ್ಥಿಗಳು ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕು.”

– ಎ.ಆರ್. ಮಲ್ಲನಗೌಡ್ರ

ಎಚ್.ಕೆ. ಪಾಟೀಲರಿಗೆ ಸಚಿವ ಸ್ಥಾನ ನೀಡಲು ನವಲೂರ ಆಗ್ರಹ

0

ವಿಜಯಸಾಕ್ಷಿ ಸುದ್ದಿ, ಗದಗ: ರಾಜ್ಯದ ಹಿರಿಯ ಶಾಸಕ ಹಾಗೂ ಅನುಭವಿ ರಾಜಕಾರಣಿಯಾಗಿರುವ ಡಾ. ಎಚ್.ಕೆ. ಪಾಟೀಲ ಅವರಿಗೆ ಸಚಿವ ಸಂಪುಟ ವಿಸ್ತರಣೆಯಲ್ಲಿ ಪ್ರಮುಖ ಖಾತೆಯೊಂದಿಗೆ ಸಚಿವ ಸ್ಥಾನ ನೀಡಬೇಕು ಎಂದು ಕಟ್ಟಡ ಕಾರ್ಮಿಕರ ಮಹಾಸಂಘದ ಮಾಜಿ ಅಧ್ಯಕ್ಷ ಹಾಗೂ ಎಐಟಿಸಿಯು ಗದಗ ಜಿಲ್ಲಾಧ್ಯಕ್ಷ, ಕರ್ನಾಟಕ ರಾಜ್ಯ ಉಪಾಧ್ಯಕ್ಷ ಎಂ.ಐ. ನವಲೂರ ಆಗ್ರಹಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಎಚ್.ಕೆ. ಪಾಟೀಲ ಅವರು ಹಲವು ದಶಕಗಳಿಂದ ಶಾಸಕರಾಗಿ ನೀರಾವರಿ, ಗ್ರಾಮೀಣಾಭಿವೃದ್ಧಿ, ಪಂಚಾಯತ್‌ರಾಜ್, ಕಾನೂನು ಹಾಗೂ ಸಂಸದೀಯ ವ್ಯವಹಾರಗಳಂತಹ ಮಹತ್ವದ ಇಲಾಖೆಗಳಲ್ಲಿ ಜನಪರ ಆಡಳಿತ ನೀಡಿರುವ ಅನುಭವಿ ನಾಯಕರು ಎಂದು ಹೇಳಿದ್ದಾರೆ.

ಉತ್ತರ ಕರ್ನಾಟಕದ ಪರ ಧ್ವನಿಯಾಗಿ ರೈತರ ಹಿತಾಸಕ್ತಿಗಾಗಿ ಅನೇಕ ಯೋಜನೆಗಳನ್ನು ಜಾರಿಗೆ ತರುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದಾರೆ. ದೀನ ದಲಿತರು, ಅಲ್ಪಸಂಖ್ಯಾತರು ಸೇರಿದಂತೆ ಸಮಾಜದ ಎಲ್ಲ ವರ್ಗಗಳ ಅಭಿವೃದ್ಧಿಗೆ ಶ್ರಮಿಸಿರುವ ಎಚ್.ಕೆ. ಪಾಟೀಲ ಅವರು ಪ್ರಾಮಾಣಿಕ ಹಾಗೂ ಜನಪರ ರಾಜಕಾರಣಿಯಾಗಿ ಗುರುತಿಸಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.

ಹೀಗಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಚಿವ ಸಂಪುಟ ವಿಸ್ತರಣೆಯಲ್ಲಿ ಎಚ್.ಕೆ. ಪಾಟೀಲ ಅವರಿಗೆ ಪ್ರಮುಖ ಖಾತೆಯೊಂದಿಗೆ ಸಚಿವ ಸ್ಥಾನ ನೀಡಿ, ಉತ್ತರ ಕರ್ನಾಟಕಕ್ಕೆ ಸಮರ್ಪಕ ಪ್ರಾತಿನಿಧ್ಯ ಕಲ್ಪಿಸಬೇಕು ಎಂದು ನವಲೂರ ಒತ್ತಾಯಿಸಿದ್ದಾರೆ.

450ನೇ ದಿನಕ್ಕೂ ನಿರಂತರ ಅನ್ನಸೇವೆ

0

ವಿಜಯಸಾಕ್ಷಿ ಸುದ್ದಿ, ಹಗರಿಬೊಮ್ಮನಹಳ್ಳಿ: ಪಟ್ಟಣದ ರಾಮನಗರದ ದರ್ಶನ್ ಹೋಟೆಲ್ ಮಾಲೀಕ ಎಸ್.ಎಂ. ಗಂಗಾಧರಯ್ಯ ಹಾಗೂ ಅವರ ಆಪ್ತ ಸ್ನೇಹಿತರ ಬಳಗದಿಂದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯ ಒಳರೋಗಿಗಳಿಗೆ ಪ್ರತಿನಿತ್ಯ ನೀಡಲಾಗುತ್ತಿರುವ ಉಚಿತ ಉಪಹಾರ ಸೇವೆ 450ನೇ ದಿನವನ್ನು ಯಶಸ್ವಿಯಾಗಿ ಪೂರೈಸಿತು.

ಈ ಸಂದರ್ಭದಲ್ಲಿ ಆಸ್ಪತ್ರೆಯ 121 ಒಳರೋಗಿಗಳಿಗೆ ಉಚಿತ ಉಪಹಾರ ವಿತರಿಸಲಾಯಿತು. ಸೇವೆ ಆರಂಭವಾದ ನಂತರ ಒಂದೇ ದಿನದಲ್ಲಿ ಅತಿ ಹೆಚ್ಚು ರೋಗಿಗಳಿಗೆ ಉಪಹಾರ ವಿತರಿಸಿದ ದಿನ ಎಂಬ ವಿಶೇಷಕ್ಕೂ ಇದು ಸಾಕ್ಷಿಯಾಯಿತು.

2025ರ ಮಾರ್ಚ್ 31ರಂದು ಆರಂಭಗೊಂಡ ಈ ಸಮಾಜಮುಖಿ ಕಾರ್ಯವು ಸ್ನೇಹಿತರ ಸಹಕಾರದಿಂದ ನಿರಂತರವಾಗಿ ಸಾಗುತ್ತಿದ್ದು, ರೋಗಿಗಳು ಹಾಗೂ ಸಾರ್ವಜನಿಕರಿಂದ ಮೆಚ್ಚುಗೆಗೆ ಪಾತ್ರವಾಗಿದೆ. ದರ್ಶನ್ ಹೋಟೆಲ್ ಸಿಬ್ಬಂದಿಯೂ ಈ ಸೇವೆಯಲ್ಲಿ ಕೈಜೋಡಿಸುತ್ತಿದ್ದಾರೆ.

ಈ ಸಂದರ್ಭದಲ್ಲಿ ಸಿಎಂ ಶ್ರೀನಿವಾಸ್, ಸರ್ದಾರ್ ಯಮನೂರಪ್ಪ, ಪಾನ್‌ಶಾಪ್ ಪುಟ್ಟಣ್ಣ, ಆಟೋ ವೀರೇಶ್, ಮಡಿವಾಳರ ಅಶೋಕ್, ಸೆರಗಾರ್ ಪರಶುರಾಮ್ ಹಾಗೂ ಹೋಟೆಲ್ ಸಿಬ್ಬಂದಿ ಉಪಸ್ಥಿತರಿದ್ದರು.

ಹುಲಿವೇಷಗಳ ನಡುವೆ ಮೊಹರಂ ವೈಭವ

0

ವಿಜಯಸಾಕ್ಷಿ ಸುದ್ದಿ, ಹಗರಿಬೊಮ್ಮನಹಳ್ಳಿ: ತಾಲೂಕಿನ ಚಿಂತ್ರಪಳ್ಳಿ ಗ್ರಾಮದಲ್ಲಿ ಮೊಹರಂ ಹಬ್ಬದ ಕೊನೆಯ ದಿನದ ಆಚರಣೆ ಸಡಗರ, ಸಂಭ್ರಮ ಹಾಗೂ ಧಾರ್ಮಿಕ ಭಕ್ತಿಭಾವದೊಂದಿಗೆ ನೆರವೇರಿತು. ಗ್ರಾಮದ ಮಸೀದಿಯಿಂದ ಆರಂಭವಾದ ದೇವರ ಮೆರವಣಿಗೆ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಭಕ್ತರ ಗಮನ ಸೆಳೆಯಿತು.

ಮೆರವಣಿಗೆಯಲ್ಲಿ ಹುಲಿವೇಷಧಾರಿಗಳು, ಅಚ್ಚಳ್ಳಿಗಳು ಹಾಗೂ ಹಿಡಿಂಬ ವೇಷಧಾರಿಗಳು ದೇವರ ಮುಂಭಾಗದಲ್ಲಿ ಕುಣಿದು ಕುಪ್ಪಳಿಸುವ ಮೂಲಕ ಭಕ್ತಿಭಾವ ಮೆರೆದರು. ಕಹಳೆ, ಹಲಗೆ ಸೇರಿದಂತೆ ಸಾಂಪ್ರದಾಯಿಕ ತಾಳವಾದ್ಯಗಳ ನಿನಾದದ ನಡುವೆ ಮೆರವಣಿಗೆ ಸಾಗಿದ್ದು, ಗ್ರಾಮದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು.

ಮಹಿಳೆಯರು ಹಾಗೂ ಮಕ್ಕಳು ದೇವರ ಮೆರವಣಿಗೆಯ ಹಾದಿಯಲ್ಲಿ ನೀರು ಹಾಕಿ ತಮ್ಮ ಹರಕೆ ಸಲ್ಲಿಸುವ ಮೂಲಕ ಭಕ್ತಿ ಸಮರ್ಪಿಸಿದರು. ಮೊಹರಂ ಆಚರಣೆಯಲ್ಲಿ ಹಿಂದೂ–ಮುಸ್ಲಿಂ ಬಾಂಧವರು ಒಂದಾಗಿ ಭಾಗವಹಿಸಿ ಸೌಹಾರ್ದತೆ ಮತ್ತು ಭಾವೈಕ್ಯತೆಯ ಸಂದೇಶ ಸಾರಿದರು.

ಈ ಸಂದರ್ಭದಲ್ಲಿ ಮಸೀದಿ ಮುಖ್ಯಸ್ಥರಾದ ಹುಸೇನ್ ಸಾಬ್, ಹಸನ್ ಸಾಬ್, ಜಮಾಲ್ ಸಾಬ್, ಪುರಸಭೆ ಸದಸ್ಯ ಬಣಕಾರ್ ಸುರೇಶ್, ಗ್ರಾಮದ ಮುಖಂಡರಾದ ತಳವಾರ ಹುಲುಗಪ್ಪ, ನೇಕಾರ್ ಸುರೇಶ್, ಶೀಲಿ ಚನ್ನಪ್ಪ, ಗಂಗಾಧರ ಕೆ.ಎಂ., ಮರುಳನಗೌಡ ವಿ., ಬಾರಿಕರ ಮಾರುತಿ, ಎಂ. ಚಂದ್ರಶೇಖರ, ಬಾರಿಕರ ಶ್ರೀನಿವಾಸ, ಮುನಾಫ್ ಸಾಬ್, ಪಿಂಜಾರ್ ಸಕ್ರಪ್ಪ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ದುಶ್ಚಟ ಮುಕ್ತ ಸಮಾಜಕ್ಕೆ ವಿದ್ಯಾರ್ಥಿಗಳೇ ಶಕ್ತಿ: ಎಎಸ್‌ಐ ಮೀನಾಕ್ಷಿ ಮಟ್ಟಿ

0

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಮಾದಕ ವಸ್ತುಗಳ ವ್ಯಸನದಿಂದ ಮಕ್ಕಳ ಆರೋಗ್ಯ, ಕುಟುಂಬ ಹಾಗೂ ಸಮಾಜದ ಸ್ವಾಸ್ಥ್ಯ ಹದಗೆಡುತ್ತಿದ್ದು, ದುಶ್ಚಟ ಮುಕ್ತ ಸಮಾಜ ನಿರ್ಮಾಣದಲ್ಲಿ ವಿದ್ಯಾರ್ಥಿಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಲಕ್ಷ್ಮೇಶ್ವರ ಪೊಲೀಸ್ ಠಾಣೆಯ ಎಎಸ್‌ಐ ಮೀನಾಕ್ಷಿ ಮಟ್ಟಿ ಹೇಳಿದರು.

ಪಟ್ಟಣದ ಸರ್ಕಾರಿ ಪ್ರೌಢಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಆಯೋಜಿಸಿದ್ದ ‘ಸ್ವಾಸ್ಥ್ಯ ಸಂಕಲ್ಪ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಉತ್ತಮ ಮೌಲ್ಯಗಳು ಮತ್ತು ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸಿಕೊಳ್ಳಬೇಕು. ಪೋಕ್ಸೋ ಕಾಯ್ದೆ, ಬಾಲ್ಯ ವಿವಾಹ ನಿಷೇಧ ಕಾಯ್ದೆ ಹಾಗೂ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆಗಳ ಬಗ್ಗೆ ಅರಿವು ಹೊಂದುವುದು ಅಗತ್ಯ ಎಂದರು.

ಯೋಜನೆಯ ಮೇಲ್ವಿಚಾರಕ ನಿಂಗಪ್ಪ ಪಾಟೀಲ ಮಾತನಾಡಿ, ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಮದ್ಯವರ್ಜನ ಶಿಬಿರ, ಜ್ಞಾನ ವಿಕಾಸ ಹಾಗೂ ವಿವಿಧ ಸಮಾಜಮುಖಿ ಕಾರ್ಯಕ್ರಮಗಳನ್ನು ನಿರಂತರವಾಗಿ ಹಮ್ಮಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ಅಧ್ಯಕ್ಷತೆ ವಹಿಸಿದ್ದ ಮುಖ್ಯೋಪಾಧ್ಯಾಯ ಬಿ.ಸಿ. ಪಟ್ಟೇದ ಮಾತನಾಡಿ, ಮಕ್ಕಳಲ್ಲಿ ಬಾಲ್ಯದಿಂದಲೇ ದುಶ್ಚಟಗಳ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಬೇಕು ಎಂದರು.

ಈ ಸಂದರ್ಭದಲ್ಲಿ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಶಿಕ್ಷಕರು, ಸೇವಾಪ್ರತಿನಿಧಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

“ದುಶ್ಚಟ ಮುಕ್ತ ಸಮಾಜ ನಿರ್ಮಾಣದಲ್ಲಿ ವಿದ್ಯಾರ್ಥಿಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಮಾದಕ ವ್ಯಸನದಿಂದ ದೂರವಿರುವ ಸಂಕಲ್ಪ ಪ್ರತಿಯೊಬ್ಬರೂ ಮಾಡಬೇಕು.”

– ಮೀನಾಕ್ಷಿ ಮಟ್ಟಿ, ಎಎಸ್‌ಐ

ಸುಜಾತಾ ದೊಡ್ಡಮನಿ ಹುಟ್ಟುಹಬ್ಬ; ರೋಗಿಗಳಿಗೆ ಹಾಲು-ಹಣ್ಣು ವಿತರಣೆ

0

ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಶಿರಹಟ್ಟಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪರಾಜಿತ ಅಭ್ಯರ್ಥಿಯಾಗಿದ್ದ ಸುಜಾತಾ ದೊಡ್ಡಮನಿ ಅವರ ಹುಟ್ಟುಹಬ್ಬದ ಅಂಗವಾಗಿ ಅವರ ಅಭಿಮಾನಿ ಬಳಗದಿಂದ ಶಿರಹಟ್ಟಿ ತಾಲೂಕು ಆಸ್ಪತ್ರೆಯ ರೋಗಿಗಳಿಗೆ ಹಾಲು, ಹಣ್ಣು ಹಾಗೂ ಬ್ರೆಡ್ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ ಸೋಮನಗೌಡ ಮರಿಗೌಡ್ರ ಮಾತನಾಡಿ, ಸುಜಾತಾ ದೊಡ್ಡಮನಿ ಅವರು ಕ್ಷೇತ್ರದ ಅಭಿವೃದ್ಧಿಗೆ ವಿಶೇಷ ಅನುದಾನಗಳನ್ನು ತಂದು ಜನಸೇವೆಗೆ ಶ್ರಮಿಸುತ್ತಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಅಭಿವೃದ್ಧಿ ಕಾರ್ಯಗಳು ನಡೆಯಲಿವೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಹಾಲಪ್ಪ ದುಗ್ಗಾಣಿ, ಮಲ್ಲಪ್ಪ ಹುಯಿಲಗೋಳ, ಮರಿಯಪ್ಪ ಸಣ್ಣತಂಗಿಯವರ, ಮಾಬುಸಾಬ ಲಕ್ಷ್ಮೇಶ್ವರ, ಮಂಜುನಾಥ ತಳವಾರ, ಮಹದೇವಗೌಡ ಪಾಟೀಲ, ಫಕ್ಕೀರೇಶ ಬಕ್ಕಸದ, ಫಕ್ಕೀರೇಶ ಕಲ್ಯಾಣಿ, ಸಬ್‌ಜಾನಸಾಬ ಲಕ್ಷ್ಮೇಶ್ವರ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಮಳೆಗಾಗಿ ಮುಗಿಲಿನತ್ತ ರೈತರ ಚಿತ್ತ..!

0

ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ಮುಂಗಾರು ಮಳೆ ಕೈಕೊಟ್ಟ ಪರಿಣಾಮ ಶಿರಹಟ್ಟಿ ತಾಲೂಕಿನ ರೈತರಲ್ಲಿ ಆತಂಕ ಮನೆ ಮಾಡಿದೆ. ಮುಂಗಾರು ಪೂರ್ವ ಸುರಿದ ಮಳೆಯನ್ನು ನಂಬಿ ರೈತರು ಹೈಬ್ರಿಡ್ ಜೋಳ, ಗೋವಿನ ಜೋಳ, ತೊಗರಿ, ಹೆಸರು, ಶೇಂಗಾ ಸೇರಿದಂತೆ ವಿವಿಧ ಬೆಳೆಗಳ ಬಿತ್ತನೆ ಪೂರ್ಣಗೊಳಿಸಿದ್ದರು. ಆದರೆ ನಂತರ ಸಮರ್ಪಕ ಮಳೆಯಾಗದ ಕಾರಣ ಮೊಳಕೆಯೊಡೆದ ಬೆಳೆಗಳು ಒಣಗಲಾರಂಭಿಸಿದ್ದು, ರೈತರು ದಿನವೂ ಮುಗಿಲಿನತ್ತ ದೃಷ್ಟಿ ನೆಟ್ಟಿದ್ದಾರೆ.

ಕೆಲವೆಡೆ ಅಲ್ಪ ಪ್ರಮಾಣದ ಮಳೆಯಾದರೂ ಕೃಷಿ ಭೂಮಿಗೆ ತೇವಾಂಶ ಒದಗಿಸುವಷ್ಟು ಸುರಿಯುತ್ತಿಲ್ಲ. ಇನ್ನೊಂದೆಡೆ ಬಿತ್ತನೆ ಮಾಡದ ರೈತರು ಮಳೆಯ ನಿರೀಕ್ಷೆಯಲ್ಲೇ ಕಾಯುತ್ತಿದ್ದು, ಬಿತ್ತನೆ ಅವಧಿ ಕೈತಪ್ಪುವ ಆತಂಕ ಎದುರಿಸುತ್ತಿದ್ದಾರೆ. ಕಳೆದ ವರ್ಷವೂ ಮಳೆ ವೈಪರೀತ್ಯದಿಂದ ನಷ್ಟ ಅನುಭವಿಸಿದ್ದ ರೈತರು, ಈ ವರ್ಷವೂ ಸಾಲ ಮಾಡಿ ಬೀಜ ಮತ್ತು ಗೊಬ್ಬರ ಖರೀದಿಸಿ ಬಿತ್ತನೆ ನಡೆಸಿದ್ದಾರೆ. ಇದೀಗ ಮಳೆ ವಿಳಂಬವಾಗಿರುವುದು ಅವರ ಸಂಕಷ್ಟವನ್ನು ಮತ್ತಷ್ಟು ಹೆಚ್ಚಿಸಿದೆ.

ಮಳೆಗಾಗಿ ಶಿರಹಟ್ಟಿ ಪಟ್ಟಣ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಗುರ್ಜಿ ಪೂಜೆ ಸೇರಿದಂತೆ ಸಾಂಪ್ರದಾಯಿಕ ಪೂಜೆ-ಪುನಸ್ಕಾರಗಳು ನಡೆಯುತ್ತಿವೆ. ಉತ್ತಮ ಮಳೆಯಾಗಿ ಬೆಳೆಗಳು ಉಳಿಯಲಿ ಎಂಬ ಆಶಯದಿಂದ ರೈತರು ವರುಣನ ಮೊರೆ ಹೋಗುತ್ತಿದ್ದಾರೆ. ಕೃಷಿಯನ್ನೇ ಜೀವನಾಧಾರವಾಗಿಸಿಕೊಂಡಿರುವ ಕುಟುಂಬಗಳಲ್ಲಿ ಅನಿಶ್ಚಿತತೆಯ ವಾತಾವರಣ ನಿರ್ಮಾಣವಾಗಿದೆ.

ಈ ಕುರಿತು ಪ್ರತಿಕ್ರಿಯಿಸಿದ ಸಹಾಯಕ ಕೃಷಿ ನಿರ್ದೇಶಕ ಶಿವಕುಮಾರ ಕಾಶಪ್ಪನವರ, ಈಗಾಗಲೇ ಬಿತ್ತನೆ ಮಾಡಿದ ರೈತರು ಬೆಳೆ ಸಂರಕ್ಷಣೆಗೆ ಸೂಕ್ತ ಕ್ರಮ ಕೈಗೊಳ್ಳಬೇಕು. ಹೊಸದಾಗಿ ಬಿತ್ತನೆ ಮಾಡುವವರು ಮಳೆಯಾದ ನಂತರವೇ ತೇವಾಂಶ ಪರಿಶೀಲಿಸಿ ಬಿತ್ತನೆ ಮಾಡುವುದು ಒಳಿತು ಎಂದು ಸಲಹೆ ನೀಡಿದರು.

“ಈಗಾಗಲೇ ಬಿತ್ತನೆ ಮಾಡಿದ ರೈತರು 19-19-19 ಹಾಗೂ ರಂಜಕ ಗೊಬ್ಬರ ಸಿಂಪಡಿಸಿ ಎಡೆ ಹೊಡೆಯಬೇಕು. ಹೊಸದಾಗಿ ಬಿತ್ತನೆ ಮಾಡುವವರು ಮಳೆಯಾದ ಬಳಿಕ ತೇವಾಂಶ ಪರಿಶೀಲಿಸಿ ಬಿತ್ತನೆ ಮಾಡಬೇಕು.”

– ಶಿವಕುಮಾರ ಕಾಶಪ್ಪನವರ, ಸಹಾಯಕ ಕೃಷಿ ನಿರ್ದೇಶಕರು

RSS ವಿರುದ್ಧ ಅವಹೇಳನಕಾರಿ ಪೋಸ್ಟ್! ಸಚಿವ ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಕೋರ್ಟ್‌ ಸಮನ್ಸ್‌!

ಬೆಂಗಳೂರು: ಆರ್‌ಎಸ್‌ಎಸ್ ವಿರುದ್ಧ ಅವಹೇಳನಕಾರಿ ಹೇಳಿಕೆ ಮತ್ತು ಪೋಸ್ಟ್ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಯುವ ಕಾಂಗ್ರೆಸ್ ಮುಖಂಡ ಮೊಹಮ್ಮದ್ ಹ್ಯಾರಿಸ್ ನಲಪಾಡ್‌ಗೆ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ.

ಬೆಂಗಳೂರು 42ನೇ ಎಸಿಜೆಎಂ ಕೋರ್ಟ್ ಜುಲೈ 21 ರಂದು ಇಬ್ಬರೂ ಖುದ್ದಾಗಿ ಹಾಜರಾಗುವಂತೆ ಆದೇಶ ನೀಡಿದೆ.

ಪ್ರಕರಣವು ಆರ್‌ಎಸ್‌ಎಸ್ ಕಾರ್ಯಕರ್ತ ಎ. ತೇಜಸ್ ಅವರು ದಾಖಲಿಸಿದ್ದ ಖಾಸಗಿ ದೂರಿಗೆ ಸಂಬಂಧಿಸಿದೆ. ದೂರಿನಲ್ಲಿ, 2025ರ ಅಕ್ಟೋಬರ್ 14 ರಂದು ಸಚಿವ ಪ್ರಿಯಾಂಕ್ ಖರ್ಗೆ ಅವರು ಆರ್‌ಎಸ್‌ಎಸ್ ಸದಸ್ಯರ ವಿರುದ್ಧ ಟ್ವೀಟ್ ಮೂಲಕ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.

ಅದೇ ರೀತಿ, ಯೂಟ್ಯೂಬ್ ಚಾನಲ್‌ನಲ್ಲಿ ಮೊಹಮ್ಮದ್ ಹ್ಯಾರಿಸ್ ನಲಪಾಡ್ ಅವರು ಸಹ ಸಂಘದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದು, ಇದರಿಂದ ಸಂಘದ ಘನತೆಗೆ ಧಕ್ಕೆಯಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಇದೇ ವೇಳೆ, ಸಚಿವ ಪ್ರಿಯಾಂಕ್ ಖರ್ಗೆ ಅವರ ವಿರುದ್ಧದ ಕ್ರಿಮಿನಲ್ ಮಾನನಷ್ಟ ಪ್ರಕರಣವನ್ನು ನ್ಯಾಯಾಲಯ ವಿಚಾರಣೆಗೆ ಅಂಗೀಕರಿಸಿಲ್ಲ ಎಂಬುದೂ ತಿಳಿದುಬಂದಿದೆ.

ಕೋರ್ಟ್ ಸಮನ್ಸ್ ಜಾರಿಯಾದ ಹಿನ್ನೆಲೆಯಲ್ಲಿ ಪ್ರಕರಣ ಇದೀಗ ಕಾನೂನು ಹಂತದಲ್ಲಿ ಮುಂದುವರಿದಿದೆ.

ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಭಕ್ತರ ದಂಡು; ಒಂದೇ ದಿನ 81 ಸಾವಿರಕ್ಕೂ ಹೆಚ್ಚು ಮಂದಿ ಭೇಟಿ

0

ತಿರುಪತಿ: ತಿರುಮಲ ತಿರುಪತಿ ದೇವಾಲಯದಲ್ಲಿ ಕಳೆದ ಕೆಲವು ದಿನಗಳಿಂದ ಭಕ್ತರ ಸಂಖ್ಯೆ ಭಾರೀ ಪ್ರಮಾಣದಲ್ಲಿ ಹೆಚ್ಚಾಗಿದೆ.

ತಿಮ್ಮಪ್ಪನ ದರ್ಶನ ಪಡೆಯಲು ದೇಶದ ವಿವಿಧ ಭಾಗಗಳಿಂದ ಬಂದಿರುವ ಭಕ್ತರು ಉಚಿತ ಸರ್ವ ದರ್ಶನ ಕ್ಯೂನಲ್ಲಿ ಕಿಲೋಮೀಟರ್‌ಗಟ್ಟಲೆ ಸಾಲು ನಿಂತಿದ್ದಾರೆ.

ದೇವಾಲಯ ಮೂಲಗಳ ಪ್ರಕಾರ, ನಿನ್ನೆ ಒಂದೇ ದಿನದಲ್ಲಿ 81 ಸಾವಿರಕ್ಕೂ ಹೆಚ್ಚು ಭಕ್ತರು ಶ್ರೀ ವೆಂಕಟೇಶ್ವರ ಸ್ವಾಮಿಯ ದರ್ಶನ ಪಡೆದಿದ್ದಾರೆ. ಬೆಳಿಗ್ಗೆ 8 ಗಂಟೆಯ ನಂತರ ಸರ್ವ ದರ್ಶನಕ್ಕೆ ಬರುವ ಭಕ್ತರಿಗೆ 18 ರಿಂದ 24 ಗಂಟೆಗಳ ನಿರೀಕ್ಷೆ ಸಮಯ ಎದುರಾಗುತ್ತಿದೆ. ಟೋಕನ್ ಪಡೆದ ಭಕ್ತರಿಗೆ ಕೂಡ 4 ರಿಂದ 6 ಗಂಟೆಗಳ ಕಾಯುವ ಅವಧಿ ಇದೆ ಎಂದು ತಿಳಿದುಬಂದಿದೆ.

ದರ್ಶನಕ್ಕೆ ಬಂದ ಭಕ್ತರಲ್ಲಿ ನಿನ್ನೆ ಒಂದೇ ದಿನದಲ್ಲಿ 44,874 ಮಂದಿ ಮುಡಿಕೊಟ್ಟಿದ್ದಾರೆ. ಭಕ್ತರಿಂದ ಬಂದ ಕಾಣಿಕೆ ಮೂಲಕ ಹುಂಡಿಗೆ ಸುಮಾರು 3.76 ಕೋಟಿ ರೂಪಾಯಿ ಆದಾಯ ಸಂಗ್ರಹವಾಗಿದೆ.

ಭಕ್ತರ ಹೆಚ್ಚಳದೊಂದಿಗೆ ಪ್ರಸಾದ ವಿತರಣೆ ಕೂಡ ದೊಡ್ಡ ಮಟ್ಟದಲ್ಲಿ ನಡೆಯುತ್ತಿದೆ. ನಿನ್ನೆ ಒಂದೇ ದಿನದಲ್ಲಿ ಸುಮಾರು 4.42 ಲಕ್ಷ ಲಡ್ಡುಗಳು ಮಾರಾಟವಾಗಿದ್ದು, 3.31 ಲಕ್ಷಕ್ಕೂ ಹೆಚ್ಚು ಭಕ್ತರು ಅನ್ನಪ್ರಸಾದ ಪಡೆದಿದ್ದಾರೆ. ಭಕ್ತರ ಆರೋಗ್ಯದ ಹಿನ್ನೆಲೆಯಲ್ಲಿ 3,916 ಮಂದಿಗೆ ವೈದ್ಯಕೀಯ ಚಿಕಿತ್ಸೆ ನೀಡಲಾಗಿದೆ.

ಭಾರೀ ಜನಸಂದಣಿಯನ್ನು ನಿಯಂತ್ರಿಸಲು ತಿರುಮಲ ತಿರುಪತಿ ದೇವಾಲಯ ಆಡಳಿತವು ಹೆಚ್ಚುವರಿ ಭದ್ರತೆ ಮತ್ತು ವ್ಯವಸ್ಥೆಗಳನ್ನು ಜಾರಿಗೆ ತಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಿಡ್ನಾಪ್ ಶಂಕೆ ನಡುವೆ ಕಾರಿಗೆ ಬೆಂಕಿ: ಯುವಕ ಸಜೀವ ದಹನ, ಯುವತಿಗೆ ಚಾಕು ಇರಿತ!

ತುಮಕೂರು: ತುಮಕೂರು ಜಿಲ್ಲೆಯ ಶಿರಾ ತಾಲ್ಲೂಕಿನ ಜೋಗಿಹಳ್ಳಿ ಗ್ರಾಮದ ಸಮೀಪ ತುಮಕೂರು–ಪುಣೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ನಡೆದ ಭೀಕರ ಘಟನೆಯಲ್ಲಿ ಯುವಕನೊಬ್ಬ ಕಾರಿನಲ್ಲೇ ಸಜೀವ ದಹನಗೊಂಡಿದ್ದು, ಯುವತಿಯೋರ್ವಳು ಚಾಕು ಇರಿತದಿಂದ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

ಮೃತನನ್ನು ನಾಗೇಂದ್ರ (30) ಎಂದು ಗುರುತಿಸಲಾಗಿದ್ದು, ಗಾಯಗೊಂಡ ಯುವತಿಯನ್ನು ಬೆಂಗಳೂರಿನ ಜಯನಗರ ನಿವಾಸಿ ರಮ್ಯಾ ಎಂದು ಗುರುತಿಸಲಾಗಿದೆ. ಗಾಯಾಳು ರಮ್ಯಾಳನ್ನು ತಕ್ಷಣ ತುಮಕೂರು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ನಾಗೇಂದ್ರ ರಮ್ಯಾಳನ್ನು ಬೆಂಗಳೂರಿನಿಂದ ಅಂಕೋಲದ ಕಡೆಗೆ ಕಾರಿನಲ್ಲಿ ಕರೆದೊಯ್ಯುತ್ತಿದ್ದ ಎನ್ನಲಾಗಿದೆ. ಈ ವೇಳೆ ಜೋಗಿಹಳ್ಳಿ ಗ್ರಾಮದ ಸಮೀಪ ರಸ್ತೆ ಬದಿಯಲ್ಲಿ ಕಾರು ನಿಲ್ಲಿಸಿ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದ್ದು, ಗಲಾಟೆ ತಾರಕಕ್ಕೇರಿದ ವೇಳೆ ನಾಗೇಂದ್ರ ಯುವತಿಯ ತಲೆಗೆ ಚಾಕುವಿನಿಂದ ಇರಿದಿದ್ದಾನೆ ಎಂದು ತಿಳಿದುಬಂದಿದೆ.

ಇದರ ಬೆನ್ನಲ್ಲೇ ಕಾರಿಗೆ ಏಕಾಏಕಿ ಬೆಂಕಿ ಹೊತ್ತಿಕೊಂಡಿದ್ದು, ಕೆಲವೇ ಕ್ಷಣಗಳಲ್ಲಿ ಬೆಂಕಿ ಇಡೀ ಕಾರನ್ನು ಆವರಿಸಿದೆ. ಪರಿಣಾಮ ನಾಗೇಂದ್ರ ಕಾರಿನೊಳಗೇ ಸಿಲುಕಿ ಸಜೀವ ದಹನಗೊಂಡಿದ್ದಾನೆ. ಘಟನೆಯ ವೇಳೆ ಕಾರು ಚಾಲನೆ ಮಾಡುತ್ತಿದ್ದ ಪ್ರವೀಣ್‌ಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಾರಿಗೆ ಬೆಂಕಿ ಹೇಗೆ ಹೊತ್ತಿಕೊಂಡಿತು, ಇದು ತಾಂತ್ರಿಕ ದೋಷವೇ, ಸ್ಫೋಟವೇ ಅಥವಾ ಬೇರೆ ಯಾವುದೇ ಕಾರಣವೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಈ ಕುರಿತು ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಕಳ್ಳಂಬೆಳ್ಳ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಕಾರು ಬೆಂಕಿಗಾಹುತಿಯಾದ ನಿಖರ ಕಾರಣ ಹಾಗೂ ಕಿಡ್ನಾಪ್ ಶಂಕೆ ಸೇರಿದಂತೆ ಎಲ್ಲಾ ಅಂಶಗಳ ಕುರಿತು ತನಿಖೆ ಮುಂದುವರಿಸಿದ್ದಾರೆ.

ಪೊಲೀಸರ ತನಿಖೆಯ ಬಳಿಕ ಘಟನೆಯ ನಿಖರ ಹಿನ್ನೆಲೆ ಮತ್ತು ಸತ್ಯಾಂಶ ಹೊರಬೀಳುವ ನಿರೀಕ್ಷೆಯಿದೆ.