Home Blog

ರಾಜ್ಯ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ವಿಜಯಲಕ್ಷ್ಮಿ ಅಕ್ಕಿ ಆಯ್ಕೆ

0

ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ಶಿರಹಟ್ಟಿ ತಾಲೂಕಿನ ಮಾಗಡಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಹೆಣ್ಣು ಮಕ್ಕಳ ಶಾಲೆಯ ಸಹ ಶಿಕ್ಷಕಿ ವಿಜಯಲಕ್ಷ್ಮಿ ಅಕ್ಕಿ ಅವರು ಶೈಕ್ಷಣಿಕ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆ ಹಾಗೂ ಸಾಧನೆಗೆ ರಾಜ್ಯ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ರೋಣ ತಾಲೂಕಿನ ಹೊಳೆಆಲೂರ ಎಸ್‌ಎಸ್‌ಆರ್‌ಡಿನ ಜನಸೇವಾ ಸಂಸ್ಥೆ (ರಿ) ವತಿಯಿಂದ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನದ ಅಂಗವಾಗಿ ಆಚರಿಸಲಾಗುವ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.

ಸೆ.12ರಂದು ಗದಗದ ಜೆ.ಟಿ. ಮಹಾವಿದ್ಯಾಲಯದ ಸಭಾಭವನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ವಿಜಯಲಕ್ಷ್ಮಿ ಅಕ್ಕಿ ಅವರಿಗೆ ರಾಜ್ಯ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ ನೀಡಿ ಗೌರವಿಸಲಾಗುವುದು.

ಬಿಜೆಪಿಗೆ ಶಂಕ್ರಣ್ಣ ಕಾಳೆ ರಾಜೀನಾಮೆ!

0

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಬಿಜೆಪಿಯಲ್ಲಿ ಹಿರಿಯ ಹಾಗೂ ನಿಷ್ಠಾವಂತ ಕಾರ್ಯಕರ್ತರಿಗೆ ಗೌರವ, ಬೆಲೆ ಸಿಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿರುವ ಬಿಜೆಪಿ ಹಿರಿಯ ಮುಖಂಡ ಹಾಗೂ ಗ್ರಾಪಂ ಮಾಜಿ ಸದಸ್ಯ ರಾಮಗೇರಿಯ ಶಂಕ್ರಣ್ಣ ಕಾಳೆ, ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಹೊರಬರುವುದಾಗಿ ತಿಳಿಸಿದ್ದಾರೆ.

ಪತ್ರಿಕಾ ಹೇಳಿಕೆಯಲ್ಲಿ, ಹಲವು ವರ್ಷಗಳಿಂದ ಪಕ್ಷ ಸಂಘಟನೆ ಹಾಗೂ ಜನಪರ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದು, ಪಕ್ಷ ನೀಡಿದ ಅವಕಾಶದ ಅವಧಿಯಲ್ಲಿ ಹಲವು ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದೇನೆ. ಗ್ರಾಮದಲ್ಲಿ ದೇವಸ್ಥಾನಗಳ ನಿರ್ಮಾಣ ಹಾಗೂ ಅಭಿವೃದ್ಧಿ ಕಾರ್ಯಗಳ ಮೂಲಕ ಪಕ್ಷ ಸಂಘಟನೆಗೆ ಶ್ರಮಿಸಿದ್ದೇನೆ ಎಂದು ತಿಳಿಸಿದ್ದಾರೆ.

ಆದರೆ ಇತ್ತೀಚಿನ ವರ್ಷಗಳಲ್ಲಿ ತಮ್ಮಂತಹ ಹಿರಿಯ, ನಿಷ್ಠಾವಂತ ಕಾರ್ಯಕರ್ತರನ್ನು ಕಡೆಗಣಿಸಲಾಗುತ್ತಿದೆ. ಪಕ್ಷದ ಸಿದ್ಧಾಂತ ಹಾಗೂ ಸಂಘಟನೆಗಾಗಿ ಪ್ರಾಮಾಣಿಕವಾಗಿ ದುಡಿದವರಿಗೆ ಬೆಲೆ ಇಲ್ಲದಂತಾಗಿದೆ. ಇದರಿಂದ ಮನನೊಂದು ಪಕ್ಷ ತೊರೆಯುವ ನಿರ್ಧಾರ ಕೈಗೊಂಡಿದ್ದೇನೆ ಎಂದು ಶಂಕ್ರಣ್ಣ ಕಾಳೆ ತಿಳಿಸಿದ್ದಾರೆ.

ಗಣೇಶ ವಿಸರ್ಜನೆ ವೇಳೆ ಡಿಜೆ ಸೌಂಡ್‌ಗೆ ಬ್ರೇಕ್

0

ವಿಜಯಸಾಕ್ಷಿ ಸುದ್ದಿ, ಮುಳಗುಂದ: ಗಣೇಶ ಹಬ್ಬವನ್ನು ಶಾಂತಿ ಹಾಗೂ ಸೌಹಾರ್ದತೆಯಿಂದ ಆಚರಿಸಬೇಕು. ಗಣೇಶ ವಿಸರ್ಜನೆ ಸೇರಿದಂತೆ ಹಬ್ಬದ ಸಂದರ್ಭದಲ್ಲಿ ಧ್ವನಿವರ್ಧಕ ಹಾಗೂ ಡಿಜೆ ಸೌಂಡ್‌ ಬಳಕೆಯನ್ನು ಕಾನೂನಿನಡಿ ನಿಷೇಧಿಸಲಾಗಿದ್ದು, ಸಾರ್ವಜನಿಕರು ಸಹಕರಿಸಬೇಕು ಎಂದು ಗದಗ ಡಿವೈಎಸ್‌ಪಿ ಮುರ್ತುಜಾ ಖಾದ್ರಿ ಹೇಳಿದರು.

ಮುಳಗುಂದ ಪೊಲೀಸ್ ಠಾಣೆಯಲ್ಲಿ ನಡೆದ ಗಣೇಶ ಹಬ್ಬದ ಶಾಂತಿ ಸಭೆಯಲ್ಲಿ ಮಾತನಾಡಿದ ಅವರು, ಭಾರತೀಯ ಸಂಸ್ಕೃತಿಯಲ್ಲಿ ಹಬ್ಬ–ಹರಿದಿನಗಳನ್ನು ಶಾಂತಿ, ಸೌಹಾರ್ದತೆಯಿಂದ ಆಚರಿಸುವ ಪರಂಪರೆ ಇದೆ. ನಿಷೇಧದ ನಡುವೆಯೂ ಡಿಜೆ ಸೌಂಡ್‌ ಬಳಸಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ಪೊಲೀಸ್ ಇನ್ಸ್‌ಪೆಕ್ಟರ್ ಬಿ.ಜಿ. ಸುಬ್ಬಾಪುರಮಠ ಮಾತನಾಡಿ, ಗಣೇಶ ಪ್ರತಿಷ್ಠಾಪನೆಗೆ ಸಂಬಂಧಿಸಿದಂತೆ ಪಪಂ, ವಿದ್ಯುತ್ ಪ್ರಸರಣಾ ಇಲಾಖೆ ಹಾಗೂ ಪೊಲೀಸ್ ಇಲಾಖೆಯಿಂದ ಅಗತ್ಯ ಪರವಾನಗಿ ಪಡೆಯಬೇಕು. ಪ್ರತಿಷ್ಠಾಪನಾ ಸ್ಥಳದಲ್ಲಿ ಸಿಸಿ ಕ್ಯಾಮೆರಾ ಅಳವಡಿಸುವುದು ಕಡ್ಡಾಯವಾಗಿದ್ದು, ಸಂಘದವರು ಸ್ವಯಂಸೇವಕರನ್ನು ನೇಮಿಸಿ ಸುರಕ್ಷತೆಗೆ ಆದ್ಯತೆ ನೀಡಬೇಕು. ಪಪಂ ನಿಗದಿಪಡಿಸಿದ ಸ್ಥಳದಲ್ಲಿಯೇ ಗಣೇಶ ವಿಸರ್ಜನೆ ಮಾಡಬೇಕು ಎಂದರು.

ಕಾನೂನು ಎಲ್ಲರಿಗೂ ಒಂದೇ. ಹಬ್ಬದ ಸಂದರ್ಭದಲ್ಲಿ ಯಾವುದೇ ರೀತಿಯ ಗೊಂದಲಕ್ಕೆ ಅವಕಾಶ ನೀಡದೆ ಶಾಂತಿ ಮತ್ತು ಸೌಹಾರ್ದತೆ ಕಾಪಾಡಲು ಸಾರ್ವಜನಿಕರು ಸಹಕರಿಸಬೇಕು.

— ಮುರ್ತಾಜಾ ಖಾದ್ರಿ, ಡಿವೈಎಸ್‌ಪಿ

ಸಭೆಯಲ್ಲಿ ಪಿಎಸ್‌ಐ ಡಿ.ಎಂ. ಮುಲ್ಲಾ, ಪ್ರಕಾಶ ಕಣವಿ, ಅಶೋಕ ಹುಣಸಿಮರದ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಬರ ಘೋಷಣೆಗೆ ರೈತರ ಪಾದಯಾತ್ರೆ; ಸರ್ಕಾರಕ್ಕೆ ಗಡುವು

0

ವಿಜಯಸಾಕ್ಷಿ ಸುದ್ದಿ, ಮುಳಗುಂದ: ಗದಗ ಜಿಲ್ಲೆಯಲ್ಲಿ ಭೀಕರ ಬರ ಪರಿಸ್ಥಿತಿ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ಗದಗ ತಾಲೂಕನ್ನು ಬರಪೀಡಿತ ಎಂದು ಘೋಷಿಸಿ, ರೈತರ ಸಂಕಷ್ಟಕ್ಕೆ ಸರ್ಕಾರ ತಕ್ಷಣ ಸ್ಪಂದಿಸಬೇಕು ಎಂದು ಆಗ್ರಹಿಸಿ ಮುಳಗುಂದ ಹಸಿರು ಸೇನೆ ರೈತ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಪಟ್ಟಣದ ಬಾಲಲೀಲಾ ಮಹಾಂತ ಶಿವಯೋಗಿಗಳ ಗವಿಮಠದಿಂದ ಕಂದಾಯ ಇಲಾಖೆವರೆಗೆ ಪಾದಯಾತ್ರೆ ನಡೆಸಿದ ರೈತರು, ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಬಳಿಕ ಕಂದಾಯ ಇಲಾಖೆ ಎದುರು ಪ್ರತಿಭಟನೆ ನಡೆಸಿ ತಹಸೀಲ್ದಾರ್ ಶ್ರೀನಿವಾಸಮೂರ್ತಿ ಕುಲಕರ್ಣಿ ಅವರಿಗೆ ಮನವಿ ಸಲ್ಲಿಸಿದರು.

ಗದಗ ತಾಲೂಕನ್ನು ಸಂಪೂರ್ಣ ಬರಪೀಡಿತ ಎಂದು ಘೋಷಿಸಬೇಕು. ರೈತರಿಗೆ ಬೆಳೆ ವಿಮೆ ಪರಿಹಾರವನ್ನು ತ್ವರಿತವಾಗಿ ಬಿಡುಗಡೆ ಮಾಡಬೇಕು. ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿನ ರೈತರ ಸಂಪೂರ್ಣ ಸಾಲ ಮನ್ನಾ ಮಾಡಬೇಕು ಹಾಗೂ ಜಾನುವಾರುಗಳಿಗೆ ಅಗತ್ಯ ಮೇವು ಒದಗಿಸಬೇಕು ಎಂದು ರೈತರು ಒತ್ತಾಯಿಸಿದರು. ಬೇಡಿಕೆ ಈಡೇರಿಸದಿದ್ದರೆ ರಸ್ತೆ ಬಂದ್‌ ಮಾಡಿ ಉಗ್ರ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದರು.

ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಮಲ್ಲಯ್ಯ ಕೊರವನವರ ಮಾತನಾಡಿ, ಗದಗ ಜಿಲ್ಲೆಯ ಎಲ್ಲ ತಾಲೂಕುಗಳ ಬರ ಪರಿಸ್ಥಿತಿಯ ಮಾಹಿತಿಯನ್ನು ಈಗಾಗಲೇ ಸರ್ಕಾರಕ್ಕೆ ಸಲ್ಲಿಸಲಾಗಿದ್ದು, ಬರ ಘೋಷಣೆಯಾಗುವ ಸಾಧ್ಯತೆ ಇದೆ ಎಂದರು.

ತಹಸೀಲ್ದಾರ್ ಶ್ರೀನಿವಾಸಮೂರ್ತಿ ಕುಲಕರ್ಣಿ ಮನವಿ ಸ್ವೀಕರಿಸಿ, ಬರ ಪರಿಸ್ಥಿತಿ ಕುರಿತು ಸಮೀಕ್ಷೆ ನಡೆಸಿ ಮೇಲಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ. ಶೀಘ್ರದಲ್ಲೇ ಬರಪೀಡಿತ ತಾಲೂಕು ಘೋಷಣೆಯಾಗುವ ನಿರೀಕ್ಷೆಯಿದೆ ಎಂದರು.

ಪ್ರತಿಭಟನೆಯಲ್ಲಿ ರೈತ ಸಂಘದ ಅಧ್ಯಕ್ಷ ದೇವಪ್ಪ ಅಣ್ಣಿಗೇರಿ, ಕಿರಣ ಕುಲಕರ್ಣಿ, ಬಸವರಾಜ ಕರಿಗಾರ, ದೇವರಾಜ ಸಂಗನಪೇಟಿ, ಮಹಾಂತೇಶ ಗುಂಜಳ, ಮುತ್ತಪ್ಪ ಪಲ್ಲೇದ, ಮುತ್ತಪ್ಪ ಬಳ್ಳಾರಿ, ಶಂಕ್ರಪ್ಪ ಹಿರೇಮಠ, ಲಕ್ಷ್ಮಣ ಹೊರಪೇಟಿ, ಮಹಾದೇವಪ್ಪ ಮಾನೇಗಾರ ಸೇರಿದಂತೆ ರೈತ ಸಂಘದ ಸದಸ್ಯರು ಪಾಲ್ಗೊಂಡಿದ್ದರು.

ಬರ ಪರಿಸ್ಥಿತಿ ಕುರಿತು ಈಗಾಗಲೇ ಸಮೀಕ್ಷೆ ನಡೆಸಲಾಗಿದ್ದು, ಮೇಲಧಿಕಾರಿಗಳಿಗೆ ವರದಿ ಸಲ್ಲಿಸಲಾಗಿದೆ. ಸರ್ಕಾರದ ಮಟ್ಟದಲ್ಲಿ ಅಗತ್ಯ ಕ್ರಮ ಕೈಗೊಳ್ಳುವ ನಿರೀಕ್ಷೆಯಿದೆ.

— ಶ್ರೀನಿವಾಸಮೂರ್ತಿ ಕುಲಕರ್ಣಿ, ತಹಸೀಲ್ದಾರ್

ಸೆ.13ರಂದು ಐಎಂಎ ಶತಮಾನೋತ್ಸವ ಸಂಭ್ರಮ

0

ವಿಜಯಸಾಕ್ಷಿ ಸುದ್ದಿ, ಗದಗ: ಇಂಡಿಯನ್ ಮೆಡಿಕಲ್ ಅಸೋಸಿಯೇಷನ್‌ (ಐಎಂಎ) ಶತಮಾನೋತ್ಸವ ಸಂಭ್ರಮವನ್ನು ಸೆ.13ರಂದು ನಗರದ ಕೆ.ಎಚ್. ಪಾಟೀಲ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆಡಿಟೋರಿಯಂ ಹಾಲ್‌ನಲ್ಲಿ ಆಯೋಜಿಸಲಾಗಿದೆ ಎಂದು ಐಎಂಎ ಅಧ್ಯಕ್ಷ ಡಾ. ಶ್ರೀಧರ ಕುರಡಗಿ ತಿಳಿಸಿದರು.

ನಗರದ ಪತ್ರಿಕಾಭವನದಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮಕ್ಕೆ ಆರೋಗ್ಯ ಸಚಿವ ಯು.ಟಿ. ಖಾದರ್ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ ಪ್ರಕಾಶ ಪಾಟೀಲ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ, ಡಾ. ಆರ್.ವಿ. ಅಶೋಕನ್ ಹಾಗೂ ಡಾ. ವೀರಭದ್ರಯ್ಯ ಟಿ.ಎ. ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದರು.

ಶಾಸಕ ಡಾ. ಎಚ್.ಕೆ. ಪಾಟೀಲ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಶತಮಾನೋತ್ಸವದ ಅಂಗವಾಗಿ ಜಿಲ್ಲೆಯ 100 ಶಾಲೆಗಳಿಗೆ ಚಿಕಿತ್ಸಾ ಪೆಟ್ಟಿಗೆಗಳನ್ನು ವಿತರಿಸಲಾಗುವುದು. ಈಗಾಗಲೇ ಮಹಿಳಾ ವೈದ್ಯರ ತಂಡ ಹಲವು ಶಾಲಾ–ಕಾಲೇಜುಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಆರೋಗ್ಯದ ಕುರಿತು ಮಾಹಿತಿ ಹಾಗೂ ಅರಿವು ಮೂಡಿಸಿದೆ ಎಂದು ತಿಳಿಸಿದರು.

ಪೌಷ್ಠಿಕ ಆಹಾರದಿಂದ ಆರೋಗ್ಯವಂತ ಸಮಾಜ ನಿರ್ಮಾಣ: ಸಿ.ಎಸ್. ಶಿವನಗೌಡರ

0

ವಿಜಯಸಾಕ್ಷಿ ಸುದ್ದಿ, ಲಕ್ಕುಂಡಿ: ಗರ್ಭಿಣಿಯರು, ಬಾಣಂತಿಯರು ಹಾಗೂ ಮಕ್ಕಳ ದೈನಂದಿನ ಆಹಾರದಲ್ಲಿ ಅಗತ್ಯ ಪೌಷ್ಠಿಕಾಂಶ ಇರುವಂತೆ ನೋಡಿಕೊಳ್ಳಬೇಕು. ಮಕ್ಕಳ ಶಾರೀರಿಕ ಹಾಗೂ ಮಾನಸಿಕ ಬೆಳವಣಿಗೆಗೆ ಪೌಷ್ಠಿಕ ಆಹಾರ ಅತ್ಯಂತ ಪ್ರಮುಖವಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಪ್ರಧಾನ ಹಿರಿಯ ದಿವಾಣಿ ನ್ಯಾಯಾಧೀಶ ಸಿ.ಎಸ್. ಶಿವನಗೌಡರ ಹೇಳಿದರು.

ಲಕ್ಕುಂಡಿಯ ಶ್ರೀ ಅನ್ನದಾನೇಶ್ವರ ಮಠದ ಸಭಾಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಆಯುಷ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಶಿಶು ಅಭಿವೃದ್ಧಿ ಯೋಜನೆಗಳ ಸಂಯುಕ್ತಾಶ್ರಯದಲ್ಲಿ ಸೆ.9ರಂದು ಆಯೋಜಿಸಿದ್ದ ಜಿಲ್ಲಾ ಹಾಗೂ ತಾಲೂಕು ಮಟ್ಟದ ಪೋಷಣ ಮಾಸಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ರಾಧಾ ಜಿ. ಮಣ್ಣೂರ ಮಾತನಾಡಿ, ಸೆಪ್ಟೆಂಬರ್‌ನಲ್ಲಿ ನಡೆಯುತ್ತಿರುವ ಪೋಷಣ ಮಾಸಾಚರಣೆಯನ್ನು ‘ಹಮಾರಿ ಅಂಗನವಾಡಿ, ಹಮಾರಿ ಜಿಮ್ಮೆದಾರಿ’ (ನಮ್ಮ ಅಂಗನವಾಡಿ, ನಮ್ಮ ಜವಾಬ್ದಾರಿ) ಘೋಷವಾಕ್ಯದೊಂದಿಗೆ ಆಚರಿಸಲಾಗುತ್ತಿದೆ. ಅಂಗನವಾಡಿಗಳ ಜವಾಬ್ದಾರಿ ಕೇವಲ ಕಾರ್ಯಕರ್ತೆಯರಿಗೆ ಸೀಮಿತವಾಗಿರದೆ, ಇಡೀ ಸಮಾಜದ ಜವಾಬ್ದಾರಿಯಾಗಿದೆ ಎಂದರು.

ಗರ್ಭಿಣಿಯರು, ಬಾಣಂತಿಯರು, 0ರಿಂದ 6 ವರ್ಷದೊಳಗಿನ ಮಕ್ಕಳು ಹಾಗೂ ಕಿಶೋರಿಯರ ಆರೋಗ್ಯ ಮತ್ತು ಪೌಷ್ಠಿಕತೆ ಸುಧಾರಣೆಯಲ್ಲಿ ಅಂಗನವಾಡಿಗಳು ಪ್ರಮುಖ ಪಾತ್ರ ವಹಿಸುತ್ತಿವೆ. ಸಿರಿಧಾನ್ಯಗಳ ಬಳಕೆ, ಶಾಲಾ ಪೂರ್ವ ಶಿಕ್ಷಣದ ಮಾದರಿಗಳು ಹಾಗೂ ಪ್ರಧಾನಮಂತ್ರಿ ಮಾತೃವಂದನಾ ಯೋಜನೆಯ ಸೌಲಭ್ಯಗಳ ಕುರಿತು ಅವರು ಮಾಹಿತಿ ನೀಡಿದರು.

ಜಿಲ್ಲಾ ಆಯುಷ್ ಅಧಿಕಾರಿ ಜುಬೇದಾ ಟಿಗಳೇರ ಆಯುರ್ವೇದದ ಮಹತ್ವ ವಿವರಿಸಿದರು. ಲಕ್ಕುಂಡಿ ಗ್ರಾಪಂ ಪಿಡಿಒ ಅಮೀರನಾಯಕ ನೀರು, ನೈರ್ಮಲ್ಯ ಹಾಗೂ ಪರಿಸರ ಸ್ವಚ್ಛತೆಗೆ ಆದ್ಯತೆ ನೀಡುವಂತೆ ಮನವಿ ಮಾಡಿದರು.

ಪೋಷಣ ಮಾಸಾಚರಣೆ ಅಂಗವಾಗಿ ಗರ್ಭಿಣಿಯರ ಸೀಮಂತ, ಅನ್ನಪ್ರಾಶನ, ಪೌಷ್ಠಿಕ ಆಹಾರದ ಪ್ರಾತ್ಯಕ್ಷಿಕೆ, ಆರೋಗ್ಯ ತಪಾಸಣೆ, ಮಾಹಿತಿ ಕೇಂದ್ರದ ಪ್ರದರ್ಶನ ಹಾಗೂ ‘ಬೇಟಿ ಬಚಾವೋ, ಬೇಟಿ ಪಡಾವೋ’ ಯೋಜನೆಯಡಿ ಸಸಿ ನೆಡುವ ಕಾರ್ಯಕ್ರಮ ನಡೆಯಿತು. ಮಕ್ಕಳು ಹಣ್ಣು–ತರಕಾರಿಗಳ ವೇಷಭೂಷಣ ಧರಿಸಿ ಪೌಷ್ಠಿಕ ಆಹಾರದ ಮಹತ್ವ ಸಾರಿದರು.

ಮಕ್ಕಳ ಬೆಳವಣಿಗೆಯ ವಿವಿಧ ಹಂತಗಳ ಬಗ್ಗೆ ಪಾಲಕರು ವಿಶೇಷ ಗಮನಹರಿಸಿ, ಪೌಷ್ಠಿಕ ಆಹಾರ ನೀಡುವ ಮೂಲಕ ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕು.

— ಸಿ.ಎಸ್. ಶಿವನಗೌಡರ, ಪ್ರಧಾನ ಹಿರಿಯ ದಿವಾಣಿ ನ್ಯಾಯಾಧೀಶ

ಹೆಣ್ಣು ಮಗುವಿನ ಶಿಕ್ಷಣ–ಆರೋಗ್ಯಕ್ಕೆ ಆದ್ಯತೆ: ಕೊಣ್ಣೂರಿನಲ್ಲಿ ಜಾಗೃತಿ ಜಾಥಾ

0

ವಿಜಯಸಾಕ್ಷಿ ಸುದ್ದಿ, ಕೊಣ್ಣೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಶಿಶು ಅಭಿವೃದ್ಧಿ ಯೋಜನೆ, ನರಗುಂದ ಇವರ ವತಿಯಿಂದ ಕೊಣ್ಣೂರು ಗ್ರಾಮ ಪಂಚಾಯಿತಿಯಲ್ಲಿ ಪೋಷಣ್ ಮಾಸಾಚರಣೆ ಹಾಗೂ ‘ಬೇಟಿ ಬಚಾವೋ, ಬೇಟಿ ಪಡಾವೋ’ ಕಾರ್ಯಕ್ರಮದ ಅಂಗವಾಗಿ ಜಾಗೃತಿ ಜಾಥಾ ನಡೆಯಿತು.

ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಂಜುನಾಥ ಗಣಿ ಜಾಥಾಕ್ಕೆ ಚಾಲನೆ ನೀಡಿ, ಸರ್ಕಾರದ ಹಲವು ಪ್ರಮುಖ ಯೋಜನೆಗಳಲ್ಲಿ ‘ಬೇಟಿ ಬಚಾವೋ, ಬೇಟಿ ಪಡಾವೋ’ ಯೋಜನೆಯೂ ಮಹತ್ವದ್ದಾಗಿದೆ. ಗರ್ಭಿಣಿಯರು ಪೌಷ್ಟಿಕ ಆಹಾರ ಸೇವಿಸುವುದರಿಂದ ಸುಲಭ ಹೆರಿಗೆಗೆ ಸಹಕಾರಿಯಾಗುವುದಲ್ಲದೆ, ಜನಿಸುವ ಮಕ್ಕಳು ಸದೃಢವಾಗಿ ಬೆಳೆಯಲು ಸಾಧ್ಯವಾಗುತ್ತದೆ. ಇದರಿಂದ ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಮಹತ್ವದ ಕೊಡುಗೆ ನೀಡಬಹುದು ಎಂದು ತಿಳಿಸಿದರು.

ಮೇಲ್ವಿಚಾರಕಿ ಪರಿಮಳಾ ಹೂಗಾರ ಮಾತನಾಡಿ, ಹೆಣ್ಣು ಮಕ್ಕಳ ಶಿಕ್ಷಣ, ಆರೋಗ್ಯ ಹಾಗೂ ಆರ್ಥಿಕ ಸಬಲೀಕರಣಕ್ಕೆ ಇಲಾಖೆ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಪ್ರಧಾನಮಂತ್ರಿ ಮಾತೃ ವಂದನಾ ಯೋಜನೆ, ಭಾಗ್ಯಲಕ್ಷ್ಮಿ, ಸುಕನ್ಯಾ ಸಮೃದ್ಧಿ ಯೋಜನೆ ಹಾಗೂ ಮಾತೃಪೂರ್ಣ ಯೋಜನೆಗಳು ಮಹಿಳೆಯರು ಮತ್ತು ಮಕ್ಕಳಿಗೆ ಉಪಯುಕ್ತವಾಗಿವೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಗ್ರಾಮ ಲೆಕ್ಕಾಧಿಕಾರಿ ಟಿ.ಆರ್. ಪಾಟೀಲ, ಪೋಷಣ್ ಅಭಿಯಾನ ಕಾರ್ಯಕ್ರಮ ಸಂಯೋಜಕ ಮಂಜು ಗುಗ್ಗರಿ, ಅಂಗನವಾಡಿ ಕಾರ್ಯಕರ್ತೆಯರಾದ ಶಾರದಾ ರೋಣದ, ಗಿರಿಜಾ ಮಾಚಕನೂರ, ಚಾಂದಬೀ ಮುಲ್ಲಾನವರ, ಶಾಂತಾ ಜಿಗಳೂರ, ಸುನಂದಾ ಬಾಗಲಕೋಟ, ಬಿ.ಐ. ನವಲಗುಂದ, ಎಸ್.ಎನ್. ಹುಚ್ಚಪ್ಪಯ್ಯನಮಠ, ರೇಣುಕಾ ತಳವಾರ, ದ್ರಾಕ್ಷಾಯಿಣಿ ಬಂಡಿವಡ್ಡರ, ಗೀತಾ ಪಾಟೀಲ, ಕೃಷ್ಣವ್ವ ಕರಿರೆಡ್ಡಿ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

36 ಗಂಟೆಗಳ ಇ.ಡಿ ವಿಚಾರಣೆ ಎದುರಿಸಿದ ಸಚಿವ ಸತೀಶ್ ಜಾರಕಿಹೊಳಿ; ನಿವಾಸದಲ್ಲಿ ₹3 ಕೋಟಿಗೂ ಅಧಿಕ ಹಣ ಜಪ್ತಿ

0

ಬೆಂಗಳೂರು: ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ಸಚಿವ ಸತೀಶ್ ಜಾರಕಿಹೊಳಿ ಅವರು ಸುಮಾರು 36 ಗಂಟೆಗಳ ಕಾಲ ಜಾರಿ ನಿರ್ದೇಶನಾಲಯ (ED) ವಿಚಾರಣೆ ಎದುರಿಸಿದ್ದಾರೆ.

ಸತೀಶ್ ಜಾರಕಿಹೊಳಿ ಅವರ ನಿವಾಸದಲ್ಲಿ ನಡೆದ ಇ.ಡಿ ಶೋಧ ಹಾಗೂ ವಿಚಾರಣೆ ಇದೀಗ ಅಂತ್ಯಗೊಂಡಿದೆ.

ಬುಧವಾರ ತಡರಾತ್ರಿ 2 ಗಂಟೆಯವರೆಗೆ ಸತೀಶ್ ಜಾರಕಿಹೊಳಿ ಅವರನ್ನು ವಿಚಾರಣೆ ನಡೆಸಿದ್ದ ಇ.ಡಿ ಅಧಿಕಾರಿಗಳು, ಗುರುವಾರ ಬೆಳಗ್ಗೆ 6 ಗಂಟೆಯಿಂದ ಮತ್ತೆ ವಿಚಾರಣೆ ಮುಂದುವರಿಸಿದ್ದರು. ಈ ವೇಳೆ ಸಚಿವರಿಗೆ ಸಂಬಂಧಿಸಿದ ವಿದೇಶಿ ವ್ಯವಹಾರಗಳು, ಹೂಡಿಕೆಗಳು ಹಾಗೂ ಹಣಕಾಸಿನ ವಹಿವಾಟುಗಳ ಕುರಿತು ಅಧಿಕಾರಿಗಳು ಮಾಹಿತಿ ಪಡೆದಿದ್ದಾರೆ ಎನ್ನಲಾಗಿದೆ.

ಶೋಧದ ವೇಳೆ ಸತೀಶ್ ಜಾರಕಿಹೊಳಿ ಅವರ ನಿವಾಸದಲ್ಲಿ ₹3 ಕೋಟಿಗೂ ಅಧಿಕ ಹಣ ಪತ್ತೆಯಾಗಿದ್ದು, ಇ.ಡಿ ಅಧಿಕಾರಿಗಳು ಹಣವನ್ನು ಜಪ್ತಿ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಗೋಕಾಕ್‌ನಲ್ಲಿರುವ ಸಚಿವರ ನಿವಾಸದಲ್ಲಿ ಪತ್ತೆಯಾದ ಹಣವನ್ನು ವಶಕ್ಕೆ ಪಡೆಯಲು ಅಧಿಕಾರಿಗಳು ಎರಡು ಟ್ರಂಕ್‌ಗಳನ್ನು ತಂದಿದ್ದರು ಎನ್ನಲಾಗಿದೆ.

ಇದೇ ವೇಳೆ, ಆಫ್ರಿಕಾದ ರುವಾಂಡಾದಲ್ಲಿನ ಗಣಿಗಾರಿಕೆ ಹೂಡಿಕೆಗೆ ಸಂಬಂಧಿಸಿದ ದಾಖಲೆಗಳ ಬಗ್ಗೆಯೂ ಇ.ಡಿ ಅಧಿಕಾರಿಗಳು ಮಾಹಿತಿ ಕಲೆ ಹಾಕಿದ್ದಾರೆ. ಸಚಿವರ ನಿವಾಸ ಸೇರಿದಂತೆ ಸಂಬಂಧಿತ ಸ್ಥಳಗಳಲ್ಲಿ ಪತ್ತೆಯಾದ ಹಲವು ದಾಖಲೆಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.

ಸಚಿವರ ಸಿಎಗಳಾದ ಪ್ರದೀಪ್ ಕುಮಾರ್ ಇಂಡಿ ಹಾಗೂ ಸೈದಪ್ಪ ಗದಾಡಿ ಅವರನ್ನು ಕೂಡ ಇ.ಡಿ ಅಧಿಕಾರಿಗಳು ಕರೆಸಿಕೊಂಡು ವಿಚಾರಣೆ ನಡೆಸಿ ಮಾಹಿತಿ ಪಡೆದಿದ್ದಾರೆ.

ಈ ಮಧ್ಯೆ, ಸತೀಶ್ ಜಾರಕಿಹೊಳಿ ಅವರ ಬೆಂಗಳೂರು ನಿವಾಸಕ್ಕೆ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ ಭೇಟಿ ನೀಡಿದ್ದರು. ಆದರೆ, ಇ.ಡಿ ಅಧಿಕಾರಿಗಳು ಅವರಿಗೆ ಒಳಗೆ ಪ್ರವೇಶಿಸಲು ಅವಕಾಶ ನೀಡಲಿಲ್ಲ ಎನ್ನಲಾಗಿದೆ.

ಇ.ಡಿ ವಿಚಾರಣೆ ಹಾಗೂ ಶೋಧದ ಹಿನ್ನೆಲೆಯಲ್ಲಿ ಸತೀಶ್ ಜಾರಕಿಹೊಳಿ ಅವರ ಬೆಂಬಲಿಗರು ರಾಜ್ಯದ ವಿವಿಧೆಡೆ ಪ್ರತಿಭಟನೆ ನಡೆಸಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರು, ಸತೀಶ್ ಜಾರಕಿಹೊಳಿ ಬೆಂಬಲಿಗರು ಹಾಗೂ ದಲಿತ ಸಮುದಾಯದವರು ಧಾರವಾಡ, ಚಾಮರಾಜನಗರ, ಗದಗ, ಹಾವೇರಿ ಮತ್ತು ಚಿತ್ರದುರ್ಗದಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಒಟ್ಟಾರೆ, 36 ಗಂಟೆಗಳ ವಿಚಾರಣೆ ಬಳಿಕ ಸತೀಶ್ ಜಾರಕಿಹೊಳಿ ನಿವಾಸದಲ್ಲಿ ನಡೆದ ಇ.ಡಿ ಶೋಧ ಅಂತ್ಯಗೊಂಡಿದ್ದು, ಹಣ ಹಾಗೂ ದಾಖಲೆಗಳ ಜಪ್ತಿ ಮುಂದಿನ ತನಿಖೆಯಲ್ಲಿ ಮಹತ್ವ ಪಡೆದುಕೊಂಡಿದೆ.

ನೋ-ಮ್ಯಾಪಿಂಗ್ ಮತದಾರರಿಗೆ ನೋಟಿಸ್: ವಿಚಾರಣೆಗೆ ಕಡ್ಡಾಯ ಹಾಜರಾಗಲು ಸೂಚನೆ

0

ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ಶಿರಹಟ್ಟಿ ಪಟ್ಟಣ ಪಂಚಾಯಿತಿಯ ಹಳೆ ಕಚೇರಿಯಲ್ಲಿ ಬುಧವಾರ ನೋ-ಮ್ಯಾಪಿಂಗ್ ಹಾಗೂ ಅನಾಮಲೀಸ್ ಪಟ್ಟಿಯಲ್ಲಿರುವ ಮತದಾರರ ವಿಚಾರಣೆ ಕೇಂದ್ರಕ್ಕೆ ಶಿರಹಟ್ಟಿ ವಿಧಾನಸಭಾ ಕ್ಷೇತ್ರದ ಮತದಾರರ ನೋಂದಣಾಧಿಕಾರಿ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ನಂದಾ ಹಣಬರಟ್ಟಿ ಭೇಟಿ ನೀಡಿ ಪರಿಶೀಲಿಸಿದರು.

ನಂತರ ಮಾತನಾಡಿದ ಅವರು, ಶಿರಹಟ್ಟಿ ವಿಧಾನಸಭಾ ಕ್ಷೇತ್ರದಲ್ಲಿ ನೋ-ಮ್ಯಾಪಿಂಗ್ ಪಟ್ಟಿಯಲ್ಲಿ 1,606 ಹಾಗೂ ಅನಾಮಲೀಸ್ ಪಟ್ಟಿಯಲ್ಲಿ 4,197 ಮತದಾರರು ಸೇರಿದಂತೆ ಒಟ್ಟು 5,803 ಮತದಾರರಿದ್ದಾರೆ. ಈ ಪ್ರಕರಣಗಳ ವಿಲೇವಾರಿಗೆ ಶಿರಹಟ್ಟಿ, ಮುಂಡರಗಿ ಹಾಗೂ ಲಕ್ಷ್ಮೇಶ್ವರ ತಾಲೂಕುಗಳ ತಹಶೀಲ್ದಾರರು ಸೇರಿದಂತೆ ಒಟ್ಟು 16 ಸಹಾಯಕ ಮತದಾರರ ನೋಂದಣಾಧಿಕಾರಿಗಳನ್ನು ನೇಮಕ ಮಾಡಲಾಗಿದೆ ಎಂದು ತಿಳಿಸಿದರು.

ಈ ಪೈಕಿ ಈಗಾಗಲೇ 998 ಮತದಾರರ ಪ್ರಕರಣಗಳ ವಿಲೇವಾರಿ ಕಾರ್ಯ ಪ್ರಗತಿಯಲ್ಲಿದ್ದು, ಇಲ್ಲಿಯವರೆಗೆ 386 ಪ್ರಕರಣಗಳನ್ನು ವಿಲೇವಾರಿ ಮಾಡಲಾಗಿದೆ. ಬಾಕಿ ಉಳಿದಿರುವ ಮತದಾರರಿಗೆ ಆಯಾ ಮತಗಟ್ಟೆ ವ್ಯಾಪ್ತಿಯ ಬಿಎಲ್‌ಒಗಳ ಮೂಲಕ ನೋಟಿಸ್ ನೀಡಲಾಗಿದ್ದು, ಸಂಬಂಧಿಸಿದ ಸಹಾಯಕ ಮತದಾರರ ನೋಂದಣಾಧಿಕಾರಿಗಳು ನೋಟಿಸ್ ಪಡೆದ ಮತದಾರರ ವಿಚಾರಣೆ ನಡೆಸುತ್ತಿದ್ದಾರೆ ಎಂದರು.

ನೋಟಿಸ್ ಪಡೆದಿರುವ ಮತದಾರರು ತಮಗೆ ನಿಗದಿಪಡಿಸಿದ ದಿನಾಂಕದಂದು ವಿಚಾರಣೆಗೆ ಕಡ್ಡಾಯವಾಗಿ ಹಾಜರಾಗಿ, ಅಗತ್ಯ ದಾಖಲೆಗಳನ್ನು ಸಲ್ಲಿಸಬೇಕು. ಈ ಮೂಲಕ ಅಂತಿಮ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಸೇರ್ಪಡೆಯಾಗುವಂತೆ ನೋಡಿಕೊಳ್ಳಬೇಕು ಎಂದು ನಂದಾ ಹಣಬರಟ್ಟಿ ಮನವಿ ಮಾಡಿದರು.

ನಂತರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ನಿಲೇಶ ಹಾದಿಮನಿ ಅವರು ಶಿರಹಟ್ಟಿಯಲ್ಲಿ ವಿತರಿಸಲಾಗಿದ್ದ ನೋಟಿಸ್‌ಗಳಿಗೆ ಸಂಬಂಧಿಸಿದ ಮತದಾರರ ವಿಚಾರಣೆ ನಡೆಸಿದರು.

ಗಣೇಶೋತ್ಸವಕ್ಕೆ ‘ಶಾಂತಿ’ ಮಂತ್ರ; ಡಿಜೆ, ಪಿಒಪಿಗೆ ಪೊಲೀಸ್ ಬ್ರೇಕ್

0

ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ಮುಂಬರುವ ಗಣೇಶ ಚತುರ್ಥಿಯನ್ನು ಸಾರ್ವಜನಿಕರು ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನು ಪ್ರತಿಷ್ಠಾಪಿಸುವ ಮೂಲಕ ಶಾಂತಿಯುತವಾಗಿ ಆಚರಿಸಬೇಕು ಎಂದು ಶಿರಹಟ್ಟಿ ಪಿಎಸ್‌ಐ ಈರಪ್ಪ ರಿತ್ತಿ ಹೇಳಿದರು.

ಬುಧವಾರ ಶಿರಹಟ್ಟಿ ತಾಲೂಕು ಪಂಚಾಯಿತಿ ಸಭಾಭವನದಲ್ಲಿ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಶಾಂತಿಸಭೆಯಲ್ಲಿ ಮಾತನಾಡಿದ ಅವರು, ಸಾರ್ವಜನಿಕ ಹಿತದೃಷ್ಟಿಯಿಂದ ಜಿಲ್ಲಾಧಿಕಾರಿಗಳು ಈಗಾಗಲೇ ಡಿಜೆ ವ್ಯವಸ್ಥೆ ಹಾಗೂ ಹೆಚ್ಚಿನ ಡೆಸಿಬೆಲ್ ಶಬ್ದವರ್ಧಕ ಸಾಧನಗಳ ಬಳಕೆಯನ್ನು ನಿಷೇಧಿಸಿದ್ದಾರೆ. ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಪಿಒಪಿ ಗಣೇಶ ಮೂರ್ತಿಗಳ ಬಳಕೆಯನ್ನೂ ನಿಷೇಧಿಸಲಾಗಿದ್ದು, ಗಣೇಶೋತ್ಸವ ಮಂಡಳಿಗಳು ಕಡ್ಡಾಯವಾಗಿ ಮಣ್ಣಿನಿಂದ ತಯಾರಿಸಿದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಬೇಕು ಎಂದು ತಿಳಿಸಿದರು.

ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಲು ಸಂಬಂಧಿಸಿದ ಇಲಾಖೆಗಳ ಪೂರ್ವಾನುಮತಿ ಪಡೆಯಬೇಕು. ಸಂಘಟಕರು ಕಾವಲು ಸಮಿತಿ ರಚಿಸಿ ಸ್ವಯಂಸೇವಕರನ್ನು ನಿಯೋಜಿಸಬೇಕು. ಅವರಿಗೆ ಮಂಡಳಿಯ ಹೆಸರು ಇರುವ ಬ್ಯಾಡ್ಜ್, ಕೂಪನ್ ಹಾಗೂ ಗುರುತಿನ ಚೀಟಿ ವ್ಯವಸ್ಥೆ ಕಲ್ಪಿಸಬೇಕು ಎಂದು ಸೂಚಿಸಿದರು.

ಪ್ರತಿಷ್ಠಾಪನಾ ಸ್ಥಳದಲ್ಲಿ ಮದ್ಯಪಾನ, ಧೂಮಪಾನ, ಜೂಜಾಟ, ಇಸ್ಪೀಟ್ ಸೇರಿದಂತೆ ಯಾವುದೇ ಕಾನೂನುಬಾಹಿರ ಚಟುವಟಿಕೆಗಳಿಗೆ ಅವಕಾಶ ನೀಡಬಾರದು. ಕೋಮು ಪ್ರಚೋದನೆಗೆ ಕಾರಣವಾಗುವಂತಹ ಕೃತ್ಯಗಳು ನಡೆಯದಂತೆ ಎಚ್ಚರಿಕೆ ವಹಿಸಬೇಕು. ಕಡ್ಡಾಯವಾಗಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸಿಕೊಳ್ಳುವುದರ ಜೊತೆಗೆ ಮುಂಜಾಗ್ರತಾ ಕ್ರಮವಾಗಿ ಬೆಂಕಿ ನಂದಿಸುವ ಉಪಕರಣಗಳನ್ನು ಸ್ಥಳದಲ್ಲಿ ಇರಿಸಿಕೊಳ್ಳಬೇಕು ಎಂದರು.

ಪೊಲೀಸ್ ಇಲಾಖೆ ಹೊರಡಿಸುವ ಎಲ್ಲ ನಿಯಮಗಳನ್ನು ಚಾಚೂ ತಪ್ಪದೆ ಪಾಲಿಸಿ ಶಾಂತಿಯುತವಾಗಿ ಹಬ್ಬ ಆಚರಿಸುವ ಮೂಲಕ ಇಲಾಖೆಗೆ ಸಹಕಾರ ನೀಡಬೇಕು ಎಂದು ಪಿಎಸ್‌ಐ ಈರಪ್ಪ ರಿತ್ತಿ ಹೇಳಿದರು.

ಸಭೆಯಲ್ಲಿ ತಹಶೀಲ್ದಾರ್ ಕೆ. ರಾಘವೇಂದ್ರ ರಾವ್, ಪಪಂ ಮುಖ್ಯಾಧಿಕಾರಿ ನಿಲೇಶ ಹಾದಿಮನಿ, ತಾಪಂ ಯೋಜನಾಧಿಕಾರಿ ಎಚ್.ಎನ್. ಕೊಂಡಿಕೊಪ್ಪ, ಹುಮಾಯೂನ್ ಮಾಗಡಿ, ಪರಮೇಶ ಪರಬ, ಸಂದೀಪ ಕಪ್ಪತ್ತನವರ, ಚಾಂದಸಾಬ ಮುಳಗುಂದ, ಅಜ್ಜುಗೌಡ ಪಾಟೀಲ, ಸುಧೀರ ಜಮಖಂಡಿ, ಜಕಾವುಲ್ಲಾ ಮಾಗಡಿ, ಅಲ್ಲಾಭಕ್ಷಿ ನಗಾರಿ, ಈರಣ್ಣ ಕೋಟಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಗಣೇಶೋತ್ಸವವನ್ನು ಪರಿಸರ ಸ್ನೇಹಿಯಾಗಿ ಹಾಗೂ ಶಾಂತಿಯುತವಾಗಿ ಆಚರಿಸುವುದು ಎಲ್ಲರ ಜವಾಬ್ದಾರಿ. ಡಿಜೆ, ಪಿಒಪಿ ಮೂರ್ತಿಗಳ ಬಳಕೆ ಹಾಗೂ ಕಾನೂನುಬಾಹಿರ ಚಟುವಟಿಕೆಗಳಿಗೆ ಅವಕಾಶ ನೀಡದೆ ಪೊಲೀಸ್ ಇಲಾಖೆ ಸೂಚಿಸುವ ಎಲ್ಲ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು.

— ಈರಪ್ಪ ರಿತ್ತಿ, ಪಿಎಸ್‌ಐ, ಶಿರಹಟ್ಟಿ